ರಾಜಕೀಯ
ಹಿಂದಕ್ಕೆಳೆಸುವ ಸ್ಥಾವರ ಧ್ವನಿಗಳ ಅಬ್ಬರ..!
ಒಬ್ಬ ಸಣ್ಣ ಹುಡುಗ. ಅವನ ಕೈಯಲ್ಲಿ ದೊಡ್ಡ ದೊಡ್ಡ ನಾಲ್ಕು ಕಲ್ಲುಗಳು. ಆ ಫೋಟೋದೊಂದಿಗೆ ರಾರಾಜಿಸುತ್ತಿರುವ ಸಾಲುಗಳು – ‘ನಾನು ರಾಹುಲ್ ಗಾಂಧಿಯನ್ನು ಭೇಟಿ ಮಾಡಬೇಕಿದೆ’. ಫೇಸ್ಬುಕ್ನಲ್ಲಿ ಈಚೆಗೆ ಕಾಣಿಸಿಕೊಂಡ ಈ ಚಿತ್ರದೊಂದಿಗಿನ ಸಾಲುಗಳು ಭವಿಷ್ಯದ ಪೀಳಿಗೆಯ ಹೆಜ್ಜೆಗಳು ಏನಾಗಬಹುದು ಎಂಬುದರ ಸ್ಪಷ್ಟ ಸುಳಿವನ್ನು ನೀಡುವಂತೆಯೇ ಇವೆ. ಅವುಗಳು ಹಿಂಸೆಯೊಂದಿಗೇ ಗುರುತಿಸಿಕೊಳ್ಳಬೇಕು ಎಂಬ ಕಾರ್ಯಸೂಚಿಯ ಯಶಸ್ಸಿನ ದ್ಯೋತಕವಾಗಿಯೇ ಕಾಣಿಸುತ್ತಿವೆ. ಅಂಬೆಗಾಲಿಟ್ಟು, ಆ ಹಂತವನ್ನು ದಾಟಿಕೊಂಡು ಇದೀಗ ತಾನೆ ನಡೆಯುವುದನ್ನು ಕಲಿತಿರುವ ಅತ್ಯಂತ ಕಿರಿಯ ವಯಸ್ಸಿನ ಸಣ್ಣ ಹುಡುಗನಿಗೆ ಹಿಂಸೆಯ ಭಾಷೆ, ಪರಿಭಾಷೆ ಮತ್ತು ಸ್ವರೂಪವನ್ನು ಪರಿಚಯಿಸುವ ವಿಚಿತ್ರವಾದ ನಡೆಯೊಂದನ್ನು ಸಂಕೇತಿಸುತ್ತಿವೆ.
ಭ್ರಮಾತ್ಮಕ ಚೌಕಟ್ಟುಗಳು
ನಮ್ಮ ದೃಷ್ಟಿಕೋನಗಳು ಈ ಪರಿ ದುರವಸ್ಥೆ ತಲುಪಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾದದ್ದಾದರೂ ಏಕೆ? ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಯಿತೇ? ಆ ಉದ್ದೇಶದ ಹಿಂದೆ ಕಾರ್ಯೋನ್ಮುಖವಾಗಿರುವ ಶಕ್ತಿಗಳು ಯಾವುವು? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಮೊದಲು ಈ ದೇಶದ ರಾಜಕಾರಣ ಮತ್ತು ಆಡಳಿತ ನೆಚ್ಚಿಕೊಂಡ ಹೊಸದನ್ನು ಬಹುಬೇಗ ಸ್ವೀಕರಿಸದ, ಸ್ವೀಕರಿಸಿದರೂ ನಿರಾಕರಣೆಯ ಭಾವವ ಸಾಂಪ್ರದಾಯಿಕತೆಯ ಚೌಕಟ್ಟುಗಳನ್ನು ಗೊತ್ತುಮಾಡಿಕೊಳ್ಳಬೇಕಾಗುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯಾನಂತರದ ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ ಭಾರತೀಯ ರಾಜಕಾರಣದ ವಿವಿಧ ಮಗ್ಗಲುಗಳು ಪರಿಚಯವಾಗುವುದರೊಂದಿಗೇ ಅಹಿಂಸೆಯ ಆಲೋಚನಾ ಕ್ರಮಗಳು ಹಿಂಸೆಯ ಸಂಕುಚಿತತೆಯೊಂದಿಗೆ ಮುಖಾಮುಖಿಯಾದ ವಿವಿಧ ಸಂದರ್ಭಗಳ ಚಾರಿತ್ರಿಕ ಹಿನ್ನೆಲೆ ಗಮನಕ್ಕೆ ಬರುತ್ತದೆ. ಅಹಿಂಸೆಯ ಮಾರ್ಗವು ಸ್ವಾತಂತ್ರ್ಯವನ್ನು ಕಂಡುಕೊಳ್ಳಲು ಸಹಾಯಕವಾದ ನಂತರ ಭಾರತೀಯ ಆಡಳಿತ ಅಳವಡಿಸಿಕೊಂಡ ನಿರ್ವಹಣೆಯ ಮಾದರಿಗೆ ಸಂಬಂಧಿಸಿದ ಸಂಗತಿಗಳು ತಿಳಿಯುತ್ತವೆ.
ಸಾರ್ಥಕತೆಯ ಹಾದಿಯ ನೆನಪು
ಬಾಲ್ಯದಲ್ಲಿ ನಮಗೆ ಹಲವು ಮಹನೀಯರ ತ್ಯಾಗದ ಕಾರಣಕ್ಕಾಗಿಯೇ ಸ್ವಾತಂತ್ರ್ಯ ಲಭಿಸಿರುವುದನ್ನು ಹಿರಿಯರ ಭಾಷಣಗಳು ಮನವರಿಕೆ ಮಾಡಿಕೊಡುತ್ತಿದ್ದವು. ಗಾಂಧಿ ಸೇರಿದಂತೆ ಹಲವರ ಹೋರಾಟದ ಪ್ರತಿಫಲವಾಗಿ ಸ್ವಾತಂತ್ರ್ಯ ನಮ್ಮೊಂದಿಗಿರುವುದನ್ನು ದೃಢೀಕರಿಸುತ್ತಿದ್ದವು. ಆಗ ನಮಗೆ ಹಿಂಸೆಯೇ ಶ್ರೇಷ್ಠ ಎಂಬಂಥ ದಾರಿತಪ್ಪಿಸುವ ದುರ್ಮಾರ್ಗದ ವೈಭವೀಕರಣ ಕಣ್ಣಮುಂದೆ ಬರುತ್ತಲೇ ಇರಲಿಲ್ಲ. ಬದಲಾಗಿ ಎಲ್ಲ ಭಾಷಣಗಳ ಚಿಂತನೆಗಳು ಪಡೆದುಕೊಂಡ ಸ್ವಾತಂತ್ರ್ಯವನ್ನು ಸಾರ್ಥಕಗೊಳಿಸಿಕೊಳ್ಳುವ ಹಾದಿ ಯಾವುದಾಗಿರಬೇಕು ಎಂಬುದನ್ನು ಹೊಳೆಸುವುದರ ಕಡೆಗೇ ಕೇಂದ್ರೀಕೃತವಾಗಿರುತ್ತಿದ್ದವು.ಬಾಲ್ಯದ ಅನುಭವವು ಹಲವು ಪಾಠಗಳನ್ನು ಕಲಿಸುತ್ತಿತ್ತು. ಮಕ್ಕಳು ಹೊಡೆದಾಡಿಕೊಂಡು ಬಂದರೆ ದೊಡ್ಡವರು ಬುದ್ಧಿವಾದ ಹೇಳುತ್ತಿದ್ದರು. ಹೊಡೆದಾಟ ಯಾಕೆ ಸರಿಯಲ್ಲ ಸ್ಪಷ್ಟಪಡಿಸುತ್ತಿದ್ದರು. ಹೊಡೆದವನು ಹೊಡೆತ ತಿಂದವನ ಮುಂದೆ ನಿಂತು ಕ್ಷಮೆ ಕೇಳಬೇಕಾಗುತ್ತಿತ್ತು. ಆ ಕ್ಷಮೆಯ ಪ್ರಸ್ತಾಪದೊಂದಿಗೇ ಇಬ್ಬರ ನಡುವೆ ಸ್ನೇಹ ಮತ್ತೆ ಚಿಗುರೊಡೆಯುತ್ತಿತ್ತು. ಸಣ್ಣ ಭಿನ್ನಾಭಿಪ್ರಾಯದ ಜಾಗವನ್ನು ಆಕ್ರಮಿಸಿಕೊಂಡು ಹೊಡೆದಾಡುವಷ್ಟರ ಮಟ್ಟಿಗೆ ಪ್ರಚೋದಿಸಿದ ದ್ವೇಷದ ದಟ್ಟ ಭಾವನೆಯನ್ನು ಆ ಕ್ಷಣವೇ ಅಳಿಸಿಹಾಕಿಬಿಡುತ್ತಿತ್ತು. ಆಮೇಲಾಮೇಲೆ ಸಣ್ಣ ಸಣ್ಣ ಭಿನ್ನಾಭಿಪ್ರಾಯಗಳು, ಸಣ್ಣ ಸಣ್ಣ ಜಗಳಗಳು, ಮತ್ತೆ ಒಂದಾಗಿ ಮಾತನಾಡಿಕೊಳ್ಳುವ ಸೊಗಡಿನೊಂದಿಗೇ ಬಾಲ್ಯ ಕಳೆದುಬಿಡುತ್ತಿತ್ತು. ದೊಡ್ಡವರಾಗುತ್ತಿದ್ದಂತೆಯೇ ಸಣ್ಣವರಾಗಿದ್ದಾಗಿನ ಕೆಲವು ಸಣ್ಣತನಗಳ ಪೊರೆಗಳನ್ನು ಕಳಚಿಕೊಳ್ಳುತ್ತಾ ಸಾಗಬೇಕಾಗಿತ್ತು. ಮಕ್ಕಳಾಗಿದ್ದಾಗ ಸಾಧ್ಯವಾಗಿದ್ದ ಈ ವಿವೇಕ ದೊಡ್ಡವರ ಬದುಕಿನೊಳಗೆ ಇಲ್ಲವಾಗುತ್ತದೆ. ಅವಿವೇಕತನದ ಪರಮಾವಧಿಯನ್ನು ಮತ್ತೆ ಮತ್ತೆ ಸಾಬೀತುಪಡಿಸುವ ಹಾಗೆಯೇ ಅವರು ವಿಕೃತಿಗಳೊಂದಿಗೇ ಗುರುತಿಸಿಕೊಳ್ಳುತ್ತಾರೆ. ಈಗಿನ ರಾಜಕಾರಣ ಮತ್ತು ಅದು ಪೋಷಿಸುವ ಆಡಳಿತ ವ್ಯವಸ್ಥೆಯು ಆ ವಿಕೃತಿಗಳನ್ನು ದಟ್ಟವಾಗಿಸುವ ನಕಾರಾತ್ಮಕ ಪಾತ್ರವನ್ನು ಅತ್ಯಂತ ಚಾಣಾಕ್ಷಯುತವಾಗಿ ನಿಭಾಯಿಸುತ್ತಿದೆ.
ಧೀಮಂತಿಕೆಯ ಗೈರುಹಾಜರಿ
ರಾಜಕಾರಣ ಮತ್ತು ಆಡಳಿತ ಒಂದನ್ನೊಂದು ನೆಚ್ಚಿಕೊಂಡಿರುವ ಪರಸ್ಪರ ಪೂರಕವಾದ ಕ್ಷೇತ್ರಗಳು. ಒಂದು ಶಾಸಕಾಂಗಕ್ಕೆ ಬೇಕಾದ ನಾಯಕತ್ವದ ಸಂಪನ್ಮೂಲವನ್ನು ಒದಗಿಸಿಕೊಡುವ ವಲಯವಾದರೆ, ಮತ್ತೊಂದು ಆ ಸಂಪನ್ಮೂಲದ ಆಧಾರದಲ್ಲಿ ಬಹುಮುಖೀ ಪಾತ್ರವನ್ನು ನಿರ್ವಹಿಸುವ ಕ್ರಿಯಾತ್ಮಕ ವ್ಯವಸ್ಥೆ. ಇವೆರಡನ್ನೂ ಪ್ರತಿನಿಧಿಸುವವರು ದೊಡ್ಡವರಾಗಿರಬೇಕು. ಅವರ ದೊಡ್ಡತನವು ಕೇವಲ ವಯಸ್ಸಲ್ಲಷ್ಟೇ ಅಲ್ಲ, ಅವರ ಧೀಮಂತಿಕೆಯ ಮೂಲಕ ಸಾಬೀತಾಗುತ್ತಿರಬೇಕು.ರಾಜಕಾರಣದಲ್ಲಿ ಹಿರಿವಯಸ್ಕ ರಾಜಕಾರಣಿಗಳಿದ್ದಾರೆ. ಆಡಳಿತ ವಲಯದಲ್ಲಿ ಅನುಭವಿ ಅಧಿಕಾರಿಗಳಿದ್ದಾರೆ. ಆದರೆ ಈ ಹಿರಿತನ ಮತ್ತು ಅನುಭವ ಇಡೀ ಸಮಾಜವನ್ನು ಹೊಸ ಹಾದಿಯ ಕಡೆಗೆ ಕೊಂಡೊಯ್ಯುವ ಬದಲು ಹಿಂದಿನ ಅನಾಗರಿಕ ಜಗತ್ತಿನ ಕ್ರೌರ್ಯದ ಕಡೆಗೇ ಹಿಂತಿರುಗಿಸುತ್ತಿದೆಯೇನೋ ಎಂಬ ಆತಂಕ ಆವರಿಸಿಕೊಳ್ಳುತ್ತಿದೆ. ಒಬ್ಬ ರಾಜಕಾರಣಿ ಮತ್ತೊಬ್ಬ ರಾಜಕಾರಣಿಯ ಬಗ್ಗೆ ಕೆಟ್ಟದಾಗಿ ಮಾತನಾಡುವಿಕೆ, ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿಕಟ್ಟುವ ಭರದಲ್ಲಿ ಹಿಂಸೆಯ ಮನಸ್ಥಿತಿಯನ್ನೇ ಕಾಡಿಸಿಕೊಂಡು ಪ್ರಚೋದಿಸುವ ಬಗೆ – ಇವೆಲ್ಲವೂ ಹಿರಿತನದ ಸಂಕೇತಗಳಾಗುವುದೂ ಇಲ್ಲ. ಅನುಭವ ಶ್ರೇಷ್ಠತೆಯನ್ನೂ ನಿರೂಪಿಸುವುದಿಲ್ಲ.
ನಂಬಿಕೆಯ ನಡಿಗೆ ಮತ್ತು ನಿಜದ ಅರಿವು
ನಂಬಿಕೆಯ ತಂತಿ ಮೇಲಿನ ನಡಿಗೆಯ ಹಾಗೆಯೇ ಸೂಕ್ಷ್ಮಾತಿಸೂಕ್ಷ್ಮ ಸ್ವರೂಪದೊಂದಿಗೆ ಈ ದೇಶದ ಜನರ ತಿಳುವಳಿಕೆಯು ನಿಕಟನಂಟು ಹೊಂದಿದೆ. ಇದು ಅರಿವಿನ ಎತ್ತರ ತಲುಪಿಕೊಳ್ಳುವ ಮುನ್ನವೇ ಇಲ್ಲಿಯ ರಾಜಕಾರಣ ಅವರ ಮನೋಲೋಕವನ್ನುಆವರಿಸಿಕೊಂಡುಬಿಡುತ್ತದೆ. ನಂಬಿಸಿ ಆ ಮೂಲಕ ಸೃಷ್ಟಿಯಾಗುವ ಪರವಾದ ಅಲೆಯ ಮೇಲೆ ಅದು ಯಾವತ್ತೂ ತನ್ನನ್ನು ಪ್ರತಿಷ್ಠಾಪಿಸಿಕೊಳ್ಳುತ್ತದೆ. ಇಲ್ಲಿಯ ವೈಚಾರಿಕತೆಯು ನಂಬಿಕೆಯೊಂದಿಗೆ ಆರೋಗ್ಯಕರ ಸಂವಾದವನ್ನು ಏರ್ಪಡಿಸಿಕೊಂಡು ಜನಸಮುದಾಯವನ್ನು ಒಂದು ಹೆಜ್ಜೆ ಮುಂದಕ್ಕೆ ಕರೆದೊಯ್ದರೆ, ಅದೇ ನಂಬಿಕೆಯ ಜಗತ್ತನ್ನು ಪ್ರತಿನಿಧಿಸುವ ಧಾರ್ಮಿಕ ಯಜಮಾನಿಕೆಯ ಪ್ರತಿನಿಧಿಗಳು ಮತ್ತು ಅವರೊಂದಿಗೆ ಗುರುತಿಸಿಕೊಂಡ ರಾಜಕೀಯ ಶಕ್ತಿಗಳು ಒಂದು ಹೆಜ್ಜೆ ಹಿಂದಕ್ಕೆ ಕರೆದೊಯ್ಯುತ್ತವೆ.
ಹಿಂದಕ್ಕೆಳೆಸುವ ಸ್ಥಾವರ ಧ್ವನಿಗಳು
ಈಗ ಏನಾಗಿದೆ ಎಂದರೆ ನಮ್ಮನ್ನು ಮುನ್ನಡೆಸುವ ಬೌದ್ಧಿಕ ಚಲನೆಯ ಜಂಗಮ ಶಕ್ತಿಗಳಿಗಿಂತ ನಮ್ಮನ್ನು ಹಿಂದೆಯೇ ಉಳಿಸಿ ತಟಸ್ಥವಾಗಿ ಉಳಿಸಿ ಸ್ಥಾವರಗೊಳಿಸುವ ಧ್ವನಿಗಳ ಅಬ್ಬರದ ಕಡೆಗಿನ ವ್ಯಾಮೋಹವೇ ಸಾಮೂಹಿಕ ಕಾಯಿಲೆಯಾಗಿ ಸಾರ್ವಜನಿಕ ವಲಯದಲ್ಲಿ ಬೇರೂರಿಬಿಟ್ಟಿದೆ. ಈ ಊನದ ಕಾರಣಕ್ಕಾಗಿಯೇ ಅರಿವಿನ ಆಂದೋಲನದ ಬದಲು ಇಲ್ಲೀಗ ಹಿಂಸೆಯ ದೃಷ್ಟಿಕೋನಗಳು ಹಿಂದೆಂದಿಗಿಂತಲೂ ಹೆಚ್ಚಾಗಿ ಪ್ರಾಮುಖ್ಯತೆ ಪಡೆಯುತ್ತಿವೆ. ಯಾರೊಳಗೂ ತಿಳಿದುಕೊಳ್ಳುವ ಸಂಯಮವಿಲ್ಲ. ಸಹನೆಯಿಂದ ಯೋಚಿಸುವ ತಾಳ್ಮೆಯಿಲ್ಲ. ತಕ್ಷಣವೇ ಪ್ರತಿಕ್ರಿಯಿಸುವ, ಹಾಗೆ ಪ್ರತಿಕ್ರಿಯಿಸುತ್ತಲೇ ಕ್ರೌರ್ಯ ಮೆರೆಯುವ ಪ್ರಚೋದಕ ಉತ್ಸಾಹ ಎಲ್ಲೆಲ್ಲೂ ಕಂಡುಬರುತ್ತಿದೆ. ಇದರ ಭಾಗವಾಗಿಯೇ ಸಣ್ಣ ಮಗುವಿನ ಕೈಯಲ್ಲಿ ದೊಡ್ಡ ದೊಡ್ಡ ಕಲ್ಲುಗಳನ್ನಿಟ್ಟು ‘ನಾನು ರಾಹುಲ್ ಗಾಂಧಿಯನ್ನು ಭೇಟಿಯಾಗಲು ಇಚ್ಛಿಸುತ್ತಿದ್ದೇನೆ’ ಎಂಬ ಒಕ್ಕಣೆಯ ಫೋಟೋ ಫೇಸ್ಬುಕ್ನ ಆವರಣದಲ್ಲಿ ಕಾಣಿಸಿಕೊಳ್ಳುತ್ತದೆ. ದಿಢೀರನೆ ಅದು ಹಂಚಲ್ಪಡುತ್ತದೆ. ನಾಳಿನ ಪೀಳಿಗೆಯನ್ನು ಪ್ರತಿನಿಧಿಸುವ ಪೋರನ ಹಿಂಸಾಪರ ಫೋಟೋಕ್ಕೆ ಅಸಂಖ್ಯಾತ ಲೈಕ್ಗಳು ಹರಿದುಬರುತ್ತವೆ. ಇದು ಅರಿವನ್ನು ಎತ್ತರಿಸಿಕೊಳ್ಳುವ ಲಕ್ಷಣವಲ್ಲ. ಬದಲಾಗಿ ಜನರ ಸ್ವಯಂತಿಳುವಳಿಕೆಯ ಶಕ್ತಿಯ ಮೇಲೆ ತಣ್ಣಗೆ ಆಗುವ ಗದಾಪ್ರಹಾರ.
ರೂಢಿಗತ ಸಂಕುಚಿತ ವಿಧಾನ
ನಂಬಿಕೆಯ ಜಗತ್ತು ಆಧ್ಯಾತ್ಮಿಕ ತಾತ್ವಿಕತೆಯ ಪ್ರಖರತೆಯನ್ನು ತೀವ್ರಗೊಳಿಸುವುದು ಒಂದು ಸಾಧ್ಯತೆ. ಆದರೆ, ಇದೇ ಜಗತ್ತು ದೈವಿಕ ಮತ್ತು ಧಾರ್ಮಿಕ ಮೌಢ್ಯವನ್ನು ಪ್ರತಿಷ್ಠಾಪಿಸುವುದಕ್ಕೆ ಸಹಾಯಕವಾಗುತ್ತದೆ. ಅಷ್ಟೇ ಅಲ್ಲ, ರಾಜಕೀಯದ ಸ್ವರೂಪವನ್ನು ನಿರ್ಧರಿಸುವಷ್ಟರ ಮಟ್ಟಿಗೆ ತನ್ನ ಪ್ರಭಾವವನ್ನು ಪ್ರಬಲವಾಗಿ ಬೇರೂರಿಸಿಬಿಡುತ್ತದೆ. ಇದರ ಪರಿಣಾಮವು ಜನರ ಮನೋಧರ್ಮದ ಮೇಲಾಗುತ್ತದೆ. ಅಧಿಕಾರದಲ್ಲಿರುವ ಮತ್ತು ಅಧಿಕಾರದಲ್ಲಿ ಇಲ್ಲದೇ ಇರುವ ನಾಯಕರೆನ್ನಿಸಿಕೊಂಡವರನ್ನು ಗ್ರಹಿಸುವ ಸಂಕುಚಿತ ವಿಧಾನವನ್ನೂ ರೂಢಿಸಿಬಿಡುತ್ತದೆ. ರಾಹುಲ್ ಗಾಂಧಿ ಅವರನ್ನು ಭೇಟಿಯಾಗಬೇಕಿದೆ ಎನ್ನುವ ಪುಟ್ಟ ಪೋರನ ಕೈಯಲ್ಲಿನ ದೊಡ್ಡ ದೊಡ್ಡ ಕಲ್ಲುಗಳ ಫೋಟೋ ಈ ವಿಧಾನ ಎಂಥದ್ದು ಎಂಬುದನ್ನು ನಿರೂಪಿಸಿದೆ. ಲೋಕಸಭೆಯಲ್ಲಿ ನಿರರ್ಗಳವಾಗಿ ಮಾತನಾಡಿ ಭಾಷಿಕ ಪ್ರೌಢಿಮೆ ಮೆರೆದು ಅಧಿಕಾರದಲ್ಲಿರುವವರ ಊನಗಳ ಮೇಲೆ ಬೆಳಕು ಚೆಲ್ಲುವ ಪ್ರಬುದ್ಧ ನಡೆಯನ್ನು ಪ್ರದರ್ಶಿಸುವವರು ಉತ್ತಮ ಸಂಸದೀಯ ಪಟು ಎಂಬ ಹಿರಿಮೆ ಪಾತ್ರರಾಗುವ ಪರಂಪರೆ ಇದೆ. ಆದರೆ, ಇದಕ್ಕೆ ತದ್ವಿರುದ್ಧವಾದ ನಡೆಗಳೊಂದಿಗಿನ ಹೀನ ಸಂಪ್ರದಾಯವನ್ನು ರಾಜಕಾರಣಿಗಳು ಈಗಾಗಲೇ ಆರಂಭಿಸಿಬಿಟ್ಟಿದ್ದಾರೆ. ಅಷ್ಟಕ್ಕೇ ಅವರು ಸಮಾಧಾನಗೊಳ್ಳದೇ, ಸಾಮಾಜಿಕ ಜಾಲತಾಣಗಳ ವೇದಿಕೆಯ ತಾರ್ಕಿಕ ಸಾಧ್ಯತೆಗಳ ಆಯಾಮಕ್ಕೇ ಧಕ್ಕೆಯೊದಗಿಸುವ ಹಾಗೆ ನಡೆದುಕೊಳ್ಳುತ್ತಿದ್ದಾರೆ. ಸದ್ಯದ ಮತ್ತು ಭವಿಷ್ಯದ ಹಿಂಸಾಪ್ರವೃತ್ತಿಗಳ ವಾತಾವರಣ ಸೃಷ್ಟಿಗೆ ಹೊಸ ಪೀಳಿಗೆಯ ಎಳೆ ಜೀವಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಬಿಂಬಗಳು ನಕಾರಾತ್ಮಕ ಸಂದೇಶವನ್ನು ಸಾರುತ್ತಿವೆ.
ದ್ವೇಷದ ವಿಷ
ಒಬ್ಬರನ್ನೊಬ್ಬರು ಹಿಂಸಿಸಿಕೊಳ್ಳುವ, ದ್ವೇಷ ಸಾಧಿಸುವ, ಆ ಮೂಲಕ ನೆಮ್ಮದಿಯನ್ನು ತಂದುಕೊಳ್ಳುವ ಭ್ರಮಾತ್ಮಕತೆಯೇ ಶ್ರೇಷ್ಠ ಎಂದು ನಂಬಿಸುವ ಆಟ ಈಗೀಗ ಅಧಿಕೃತತೆಯನ್ನು ಪಡೆದುಕೊಂಡಿದೆ. ಈ ಆಟದ ಓಟವು ಹಲವು ಜೀವಗಳ ಬಲಿಬೇಡುತ್ತದೆ ಎಂಬ ಸತ್ಯದ ಕಡೆಗೆ ಯಾರ ಗಮನವೂ ಇಲ್ಲ. ಅದು ನಮ್ಮನ್ನು ಯಾವ ಕೂಪಕ್ಕೆ ತಳ್ಳುತ್ತದೆ ಎಂಬ ಪರಿಜ್ಞಾನವಿಲ್ಲದೇ ದ್ವೇಷಕ್ಕೆ ಮನಸ್ಸನ್ನು ತಿರುಗಿಸಿಕೊಳ್ಳುವ ರಣೋತ್ಸಾಹವು ಪೀಳಿಗೆಯನ್ನು ಸರ್ವನಾಶದ ಕಡೆಗೆ ಕೊಂಡೊಯ್ಯುತ್ತಿದೆ. ನಮ್ಮ ನಾಯಕರ ಕುರಿತು ಅಸಮಾಧಾನಗೊಳ್ಳುವ, ಭಿನ್ನಾಭಿಪ್ರಾಯ ವ್ಯಕ್ತಪಡಿಸುವ, ಆ ಮೂಲಕ ಅವರು ನಮ್ಮ ಅಗತ್ಯಗಳೇನೇನು ಎಂಬುದರ ಬಗ್ಗೆ ಆಲೋಚಿಸುವಂತೆ ಒತ್ತಡ ಹಾಕುವುದರ ಬದಲು ವಿರೋಧ ಪಕ್ಷಗಳವರ ಬಗ್ಗೆ ದ್ವೇಷ ಹುಟ್ಟುಹಾಕುವಂಥ ವಿಷದ ಬೀಜಗಳನ್ನು ಬಿತ್ತುವ ಪ್ರಯತ್ನಗಳು ಸಾಮಾಜಿಕ ಜಾಲತಾಣಗಳ ಮೂಲಕ ಮುನ್ನೆಲೆಗೆ ಬರುತ್ತಿರುವುದು ಭವಿಷ್ಯದ ಕರಾಳತೆಯ ಬಗ್ಗೆ ಮುನ್ಸೂಚನೆ ನೀಡುತ್ತಿವೆ.
ನಮಗೆ ಅಧಿಕಾರದಲ್ಲಿರುವವರೂ ಮುಖ್ಯ. ಅವರನ್ನು ಪ್ರಶ್ನಿಸುವ ವಿರೋಧ ಪಕ್ಷಗಳವರೂ ಮುಖ್ಯ. ಜೊತೆಗೆ ತಾರ್ಕಿಕವಾಗಿ ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ವೈಚಾರಿಕ ಚಿಂತಕರೂ ಪ್ರಧಾನ ಪಾತ್ರ ನಿರ್ವಹಿಸುತ್ತಾರೆ. ಈ ಮೂರೂ ವಲಯಗಳವರನ್ನೂ ಪರಸ್ಪರ ದ್ವೇಷದ ನೆಲೆಗಳಲ್ಲಿ ನೋಡುವಂತೆ ಪ್ರಚೋದಿಸುವ ಸಣ್ಣತನದ ರಾಜಕಾರಣ ತನ್ನ ವ್ಯತಿರಿಕ್ತತೆಯನ್ನು ಈಗಾಗಲೇ ಪ್ರದರ್ಶಿಸುತ್ತಿದೆ. ಅಧಿಕಾರ, ಹಣ ಮತ್ತು ಅದಕ್ಕನುಗುಣವಾದ ಎಲ್ಲ ಸೌಲಭ್ಯಗಳನ್ನು ದಕ್ಕಿಸಿಕೊಳ್ಳುವುದರಲ್ಲಿ ಒಂದಾಗುವ ಅಧಿಕಾರರೂಢರು ಮತ್ತು ವಿರೋಧ ಪಕ್ಷಗಳವರಿಗೆ ನಾವು ಸ್ಪಷ್ಟ ಸಂದೇಶ ರವಾನಿಸಬೇಕಿದೆ. ನೀವಿಬ್ಬರೂ ಈ ದೇಶದ ನಿಜವಾದ ಬೆಳವಣಿಗೆಯ ಬಗ್ಗೆ ಆಲೋಚಿಸಿ ಎಂದು ದಿಟ್ಟವಾಗಿ ಕಿವಿಮಾತು ಹೇಳಬೇಕಿದೆ. ಒಬ್ಬರಿಗೊಬ್ಬರು ಹೇಳಿಕೆಗಳ ಮೂಲಕ ಕಚ್ಚಾಡುತ್ತಾ, ಆ ಮೂಲಕವೇ ಹಿಂಸೆಗೆ ಪ್ರಚೋದನೆ ನೀಡುತ್ತಾ, ಬೀದಿಬದಿಯಲ್ಲಿ ಅಮಾಯಕ ಜೀವಗಳ ಮಾರಣಹೋಮಕ್ಕೆ ಕಾರಣವಾಗುವ ರಾಜಕೀಯ ಪ್ರವೃತ್ತಿಗಳನ್ನು ಗಟ್ಟಿದನಿಯಲ್ಲಿ ಖಂಡಿಸಬೇಕಿದೆ. ಹಾಗಾಗದಿದ್ದರೆ ನಮ್ಮ ದೇಶ ಮಹಾನ್ ಆಗುವುದಿಲ್ಲ. ಸಮೃದ್ಧ ಭಾರತದ ಕನಸುಗಳೂ ಸಾಕಾರಗೊಳ್ಳುವುದಿಲ್ಲ.
-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ4 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ3 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ3 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ3 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ4 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ3 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ4 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
-
ದಿನದ ಸುದ್ದಿ4 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ




