ರಾಜಕೀಯ
ರಾಜಕೀಯ ಪ್ರಜ್ಞೆ : ಭಾರತೀಯ ವಾಸ್ತವಿಕತೆ
ಪ್ರಾಥಮಿಕ ಹಂತದಲ್ಲಿ ಓದುತ್ತಿರುವ ಮಕ್ಕಳನ್ನು ಆಕರ್ಷಿಸುವವರು ಸಿನಿಮಾ ನಟ-ನಟಿಯರು. ಸ್ಟಾರ್ ನಟರುಗಳ ಫೈಟ್ಗಳನ್ನೇ ನೋಡಿ ಬಣಗಳನ್ನು ಕಟ್ಟಿಕೊಂಡು ‘ನಮ್ಮ ಹೀರೋ ಹೀಗೆ, ಹಾಗೆ’ ಅಂತೆಲ್ಲಾ ಅವರು ಮಾತನಾಡಿಕೊಳ್ಳುತ್ತಾರೆ. ಹಿಂದಿನ ದಿನ ಸಿನಿಮಾ ನೋಡಿದ ನಂತರ ಮರುದಿನ ಆ ಬಗ್ಗೆ ಹೇಳಿಕೊಳ್ಳುವುದೆಂದರೆ ಅವರಿಗೆ ಪ್ರತಿಷ್ಠೆ. ಕಥೆಗಿಂತ ಫೈಟ್ಗಳ ವರ್ಣನೆಗೇ ಉತ್ಸಾಹ ಮೀಸಲು. ಒಬ್ಬ ಹೀರೋ ಫೈಟ್ ಬಗ್ಗೆ ಹೇಳಿಕೊಳ್ಳುವಾಗಲೇ ಇನ್ನೊಬ್ಬ ಹೀರೋನ ಅಭಿಮಾನಿ ಸ್ನೇಹಿತ ತಕರಾರು ಎತ್ತಿ ‘ನಮ್ಮ ಹೀರೋ ಮುಂದೆ ನಿಮ್ಮ ಹೀರೋ ಜೀರೋ’ ಎಂದ ಕೂಡಲೇ ಜಗಳ ತಾರಕಕ್ಕೇರುತ್ತದೆ. ಮಾತು ಬಿಡುವುದು, ಎಷ್ಟೋ ದಿವಸಗಳ ನಂತರ ಮತ್ತೆ ಮಾತನಾಡುವುದು, ಒಂದಷ್ಟು ಮುನಿಸು, ದ್ವೇಷ, ಸ್ನೇಹಗಳ ಮೂಲಗಳಾಗಿ ಆ ದಿನಗಳು ಕಳೆದುಹೋಗುತ್ತವೆ. ಅವರೊಳಗಿನ ಮುಗ್ಧತೆಯ ಕಾರಣಕ್ಕಾಗಿಯೇ ಅವರು ಮತ್ತೆ ಮಾತನಾಡಿಕೊಳ್ಳುತ್ತಾರೆ. ಸ್ನೇಹವನ್ನು ಉಳಿಸಿಕೊಳ್ಳುತ್ತಾರೆ. ಆ ಮುಗ್ಧತೆಯೊಂದಿಗೇ ಬೆಳವಣಿಗೆಯ ವಿವಿಧ ಹಂತಗಳು ದಾಟಿಕೊಂಡರೆ ಅವರು ಸರಿಯಾಗಿ ಆಲೋಚಿಸುವುದರ ಕಡೆಗೆ ವಾಲಿಕೊಳ್ಳುತ್ತಾರೆ. ಹಾಗಿದ್ದಾಗಲೇ ಪ್ರಶ್ನಿಸುವ ಸಹಜ ಪ್ರವೃತ್ತಿ ಜೀವಂತವಾಗಿರುತ್ತದೆ. ಮುಕ್ತಚಿಂತನೆಯ ಕಡೆಗಿನ ಹಾದಿ ತೆರೆದುಕೊಳ್ಳುತ್ತದೆ. ಆದರೆ, ಸಿನಿಮಾದೊಂದಿಗಿನ ಭಾವುಕ ನಂಟು ಕ್ರಮೇಣ ಅವರೊಳಗೆ ಅಂಧಾಭಿಮಾನ ಸೃಷ್ಟಿಸಿಬಿಡುತ್ತದೆ.
ಕಟೌಟ್, ಅದರ ಮೇಲೆ ಕ್ಷೀರಧಾರೆ ಎರೆಯುವ ಆರಾಧನಾ ಮನಸ್ಥಿತಿಯೂ ಹೀಗೆಯೇ ರೂಪುಗೊಳ್ಳುತ್ತದೆ. ಸಿನಿಮಾಭಿಮಾನ ಮತ್ತು ಸ್ಟಾರ್ ನಟರುಗಳನ್ನು ಆರಾಧಿಸುವ ಅಂಧಾಭಿಮಾನದ ಈ ಬಗೆಯ ಅತಿರೇಕದ ಮನೋಭಾವವನ್ನೇ ಜನಸಮೂಹದ ಆದ್ಯಗುಣಲಕ್ಷಣವಾಗಿಸಿಬಿಡುವ ಚಾಣಾಕ್ಷ ತಂತ್ರಗಾರಿಕೆಯನ್ನು ಭಾರತದ ರಾಜಕಾರಣ ಅತ್ಯಂತ ಚಾಣಾಕ್ಷಯುತವಾಗಿ ಪ್ರಯೋಗಿಸುತ್ತಿದೆ. ಮುಗ್ಧತೆ ಮತ್ತು ಸ್ನೇಹದ ವೈಶಾಲ್ಯತೆಯನ್ನು ಮೊಟಕುಗೊಳಿಸಿ ದೊಡ್ಡವರನ್ನು ಸಂಕುಚಿತರನ್ನಾಗಿಸುವ ರಾಜಕೀಯ ಸನ್ನಿವೇಶವನ್ನು ಅದು ಉದ್ದೇಶಪೂರ್ವಕವಾಗಿ ಸೃಷ್ಟಿಸುತ್ತಿದೆ. ಸರಿಯಾದ ರಾಜಕೀಯ ಪ್ರಜ್ಞೆಯನ್ನು ಆವಾಹಿಸಿಕೊಳ್ಳುವ ತುಡಿತವನ್ನೇ ಇಲ್ಲವಾಗಿಸಿಬಿಡುತ್ತಿದೆ. ತಮ್ಮ ಪ್ರಭಾವದ ಭರಾಟೆಯ ಅಲೆಯೊಂದಿಗೆ ಇಡೀ ಸಮಾಜದೊಳಗಿನ ಜನರ ಮನೋಶಿಲ್ಪವನ್ನು ಸಡಿಲಗೊಳಿಸಿ ದುರ್ಬಲಗೊಳಿಸುತ್ತಿರುವ ಮೂರು ಜನಪ್ರಿಯ ಕ್ಷೇತ್ರಗಳೆಂದರೆ ಸಿನಿಮಾ, ರಾಜಕಾರಣ ಮತ್ತು ಕ್ರಿಕೆಟ್. ಜನಪ್ರಿಯ ಸಿನಿಮಾಗಳು ಮತ್ತು ಕ್ರಿಕೆಟ್ ಉದ್ಯಮ ಇವೆರಡೂ ಉಂಟುಮಾಡುವ ಪ್ರಭಾವದ ಆವರಣದ ನಡುವೆಯೇ ರಾಜಕಾರಣ ತನ್ನನ್ನು ಪ್ರತಿಷ್ಠಾಪಿಸಿಕೊಳ್ಳುವ ತಂತ್ರಗಳನ್ನು ಹೆಣೆದುಕೊಳ್ಳುತ್ತದೆ. ಆ ತಂತ್ರಗಳು ಯಶಸ್ವಿಯಾಗಲೇಬೇಕು ಎಂಬ ಹಠದೊಂದಿಗೇ ಹೆಜ್ಜೆಯಿರಿಸುತ್ತದೆ. ಎದುರುಗೊಳ್ಳುವವರನ್ನು ಹಣಿಯುವ ನಿಗೂಢ ಕಾರ್ಯಸೂಚಿಗಳನ್ನು ಸಂದರ್ಭಕ್ಕೆ ಅನುಗುಣವಾಗಿ ರೂಪಿಸಿಕೊಂಡುಬಿಡುತ್ತದೆ. ಪರ್ಯಾಯ ನಾಯಕತ್ವದ ಉದಾತ್ತ ಅವಕಾಶಗಳನ್ನು ಹೊಸಕಿಹಾಕಿ ಜನರಿಂದ ಆಯ್ಕೆಯ ಐಚ್ಛಿಕತೆಯನ್ನೇ ಕಿತ್ತುಕೊಂಡುಬಿಡುತ್ತದೆ. ‘ಇವರಿಲ್ಲದಿದ್ದರೆ ಮತ್ತಿನ್ಯಾರು ಆಳುವವರು’ ಎಂಬ ಅವಲಂಬನಾ ದೃಷ್ಟಿಕೋನವನ್ನು ಅದೇ ಜನವಲಯದಲ್ಲಿಯೇ ನೆಲೆಗೊಳಿಸಿಬಿಡುತ್ತದೆ. ನಾಯಕರಲ್ಲದ ನಾಯಕರೆನ್ನಿಸಿಕೊಂಡವರನ್ನು ಆರಾಧಿಸುವವರ ಸಂಖ್ಯಾಬಾಹುಳ್ಯ ಹೆಚ್ಚಿಸಿಕೊಳ್ಳುತ್ತಲೇ ತನ್ನ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿರುತ್ತದೆ. ಆಗಲೇ ಜನರು ಮುಗ್ಧವಾಗಿ ನಂಬುತ್ತಲೇ ತಮ್ಮ ಯೋಚನೆಯ ಶಕ್ತಿಯನ್ನೇ ತ್ಯಜಿಸಿಬಿಡುತ್ತಾರೆ.
ತಾರ್ಕಿಕವೆನ್ನಿಸುವ ಪ್ರಜಾಸತ್ತಾತ್ಮಕ ವೈಚಾರಿಕ ಎಚ್ಚರದಲ್ಲಿ ರಾಜಕಾರಣವನ್ನು ಗ್ರಹಿಸುವ ಬದಲು ಹೊಗಳಿಕೆಗಳ ಅಭಿಪ್ರಾಯಗಳನ್ನು ಹೇಳಿಕೊಳ್ಳುವುದಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಳ್ಳುತ್ತಾರೆ.
ಉನ್ನತ ಹುದ್ದೆಯಲ್ಲಿರುವ ಇಬ್ಬರು ಸ್ನೇಹಿತರ ನಡುವೆ ರಾಜಕಾರಣದ ಬಗ್ಗೆ ಚರ್ಚೆ ಶುರುವಾಗುತ್ತದೆ. ಒಬ್ಬರು ಸರ್ಕಾರವನ್ನು ಆರಾಧಿಸಿ ಮಾತನಾಡಿದರೆ ಮತ್ತೊಬ್ಬರು ಪ್ರಶ್ನೆಗಳನ್ನೆತ್ತಿ ಪ್ರತಿರೋಧದ ಮಾತುಗಳನ್ನಾಡುತ್ತಾರೆ.ಪ್ರತಿರೋಧವನ್ನೊಡ್ಡಿದವರು ಯಾರೇ ಅಧಿಕಾರಕ್ಕೆ ಬರಲಿ, ಅವರನ್ನು ಪ್ರಶ್ನಿಸುವ ಹಕ್ಕನ್ನು ನಾವೆಲ್ಲರೂ ಉಳಿಸಿಕೊಳ್ಳಲೇಬೇಕು ಎಂಬ ಅನಿವಾರ್ಯತೆಯನ್ನು ಮನಗಾಣಿಸಲು ಪ್ರಯತ್ನಿಸುತ್ತಾರೆ. ಆದರೆ, ಸರ್ಕಾರದ ಬಗ್ಗೆ ಆರಾಧನಾ ಮನೋಭಾವವಿರುವ ಸ್ನೇಹಿತ ಮಾತನಾಡುತ್ತಾ ಆಡುತ್ತಾ ಭಾವುಕ ವ್ಯಗ್ರತೆಯನ್ನು ಪ್ರದರ್ಶಿಸಲಾರಂಭಿಸುತ್ತಾನೆ. ಪ್ರತಿರೋಧಧ ವಿಚಾರಗಳನ್ನು ಪ್ರಸ್ತಾಪಿಸಿದ ಮಿತ್ರನ ಸಂಯಮದ ಸಂವಾದಕ್ಕೆ ಪ್ರತಿಯಾಗಿ ವಿತಂಡವಾದ ಮುಂದಿಡಲಾರಂಭಿಸುತ್ತಾನೆ. ತಾರ್ಕಿಕ ಪ್ರಶ್ನೆಗಳಿಗೆ ಉತ್ತರಿಸಲಾಗದೇ ವ್ಯಕ್ತಿಗತ ಆರೋಪಗಳನ್ನು ಹೊರಿಸುವ ತಂತ್ರ ಅನುಸರಿಸುತ್ತಾನೆ. ಆ ಮೂಲಕ ತಾರ್ಕಿಕ ವೈಚಾರಿಕತೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಾನೆ. ಆ ಹೊತ್ತಿಗೆ ಇಬ್ಬರ ನಡುವೆ ಸೃಷ್ಟಿಯಾದ ಭಿನ್ನಾಭಿಪ್ರಾಯ ದ್ವೇಷಕ್ಕೆ ತಿರುಗುತ್ತದೆ. ಆ ದ್ವೇಷವು ಮುಂದುವರೆದು ಸ್ನೇಹ ಕೊನೆಗೊಳ್ಳುತ್ತದೆ. ರಾಜಕೀಯ ಪಕ್ಷಗಳು ತಮ್ಮೊಳಗಿನ ಅಧಿಕಾರದ ಹಸಿವನ್ನು ನೀಗಿಸಿಕೊಳ್ಳಲು ಇಂಥದ್ದೇ ಆದ ಮನೋವೈಕಲ್ಯವನ್ನು ನಿರೀಕ್ಷಿಸುತ್ತವೆ. ಇದನ್ನು ಸಾಮೂಹಿಕ ಗುಣಲಕ್ಷಣವಾಗಿಸಿ ತಮ್ಮ ಅಧಿಕಾರದ ಫಸಲು ತೆಗೆಯುವ ಉದ್ದೇಶ ಈಡೇರಿಸಿಕೊಳ್ಳುತ್ತವೆ. ನಿಜವಾದ ರಾಜಕೀಯ ಪ್ರಜ್ಞೆಯನ್ನು ಕೊಲೆಗೈದು ತಮ್ಮನ್ನು ವಿಜೃಂಭಿಸಿಕೊಳ್ಳುತ್ತವೆ.
ಪ್ರಸಕ್ತ ರಾಜಕೀಯ ವ್ಯವಸ್ಥೆಯ ಎಲ್ಲ ಮಿತಿಗಳನ್ನು ರಂಜನೀಯ ನೆಲೆಯಲ್ಲಿ ಸ್ವೀಕರಿಸುವ ವಿಚಿತ್ರವಾದ ಸಮೂಹಕೇಂದ್ರಿತ ಊನ ( Mass Syndrome)ಈಗಾಗಲೇ ವ್ಯಾಪಕವಾಗಿಬಿಟ್ಟಿದೆ. ನಮ್ಮಲ್ಲಿ ಅಧಿಕಾರ ರಾಜಕಾರಣದ ಕುರಿತಾದ ಚರ್ಚೆಗಳು ಇದರ ಸಂಕುಚಿತ ಜಾಲದ ಪರಿಧಿಯನ್ನು ದಾಟಿಕೊಳ್ಳುವುದೇ ಇಲ್ಲ. ಹಾಗೆ ದಾಟಿಕೊಳ್ಳದ ಹಾಗೆ ವಿತಂಡವಾದಿ ದೃಷ್ಟಿಕೋನಗಳು ಕಡಿವಾಣ ಬಿಗಿದುಬಿಡುತ್ತವೆ. ರಾಜಕಾರಣದೊಳಗಿನ ಊನಗಳೊಂದಿಗಿನ ಸಾಂಪ್ರದಾಯಿಕತೆಯನ್ನೇ ಮೌಲ್ಯವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ಬೇರೂರಿಸಿಬಿಡುತ್ತವೆ. ದೇಶವೊಂದರೊಳಗೆ ಸಾಮಾಜಿಕ ವ್ಯವಸ್ಥೆಯೊಂದಿರುತ್ತದೆ. ಆಡಳಿತಾರೂಢ ಸರ್ಕಾರವು ಜಪಿಸುವ ಅಭಿವೃದ್ಧಿಯ ಮಂತ್ರದೊಂದಿಗೆ ತಳುಕು ಹಾಕಿಕೊಂಡ ಆರ್ಥಿಕತೆಯು ಈ ಸಾಮಾಜಿಕ ವ್ಯವಸ್ಥೆಯ ರೂಪು-ರೇಷೆಗಳಿಗೆ ಅನುಗುಣವಾಗಿರಬೇಕು ಎಂಬ ಕನಿಷ್ಠ ಪ್ರಜ್ಞೆಯನ್ನು ಆಧರಿಸಿಯೇ ಇರುವುದಿಲ್ಲ. ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಹೆಚ್ಚಿಸುವಂತೆಯೇ ಆ ಆರ್ಥಿಕ ವ್ಯವಸ್ಥೆ ಬಲಿಷ್ಠವಾಗುತ್ತ ಸಾಗುತ್ತದೆ.
ಉಳ್ಳವರ ಪರವಾದ ಅರ್ಥವ್ಯವಸ್ಥೆಯ ಪ್ರಾಬಲ್ಯವನ್ನು ಮತ್ತಷ್ಟು ಹೆಚ್ಚಿಸುವುದರ ಕಡೆಗೆ ರಾಜಕಾರಣ ತನ್ನ ಗಮನವನ್ನು ಕೇಂದ್ರೀಕರಿಸುತ್ತದೆ. ಇಲ್ಲಿ ವ್ಯಕ್ತಿಗತ ಮಾನವ ಸಂಪನ್ಮೂಲದ ಸಮಗ್ರ ಅನ್ವಯಿಸುವಿಕೆಯ ಪರಿಕಲ್ಪನೆಗಳಿಗೆ ಆದ್ಯತೆ ಇರುವುದೇ ಇಲ್ಲ. ಸಾಮಾಜಿಕ ವ್ಯವಸ್ಥೆಯೊಳಗಿನ ಧಾರ್ಮಿಕತೆ ಮತ್ತು ಅದಕ್ಕನುಗುಣವಾಗಿಯೇ ಬೇರೂರಿಬಿಟ್ಟಿರುವ ಜಾತಿ-ಪಂಗಡಗಳ ಸಂಕೀರ್ಣ ಆವೃತ್ತಿಗಳು ಸಾಮಾಜಿಕ ಉದ್ಯಮಗಳಾಗಿಯೇ ಬೆಳೆಯುತ್ತಿರುತ್ತವೆ. ಅವುಗಳ ಸಮಾಜೋ-ಧಾರ್ಮಿಕ ಔದ್ಯಮಿಕತೆಯು ಮಠೀಯತೆ, ಮಠಾಧೀಶ ಮುಂದಾಳತ್ವ, ನಮ್ಮ ಜಾತಿಯವರಿಷ್ಟಿದ್ದೇವೆ ಎಂದು ತೋರಿಸಿಕೊಳ್ಳುವ ಬೃಹತ್ ಸಮಾವೇಶಗಳು, ಅವುಗಳಲ್ಲಿ ಭಾಗವಹಿಸಿ ತಮ್ಮ ಟೊಳ್ಳು ಮುಖಂಡತ್ವವನ್ನು ಮತ್ತೊಮ್ಮೆ ನವೀಕರಿಸಿಕೊಳ್ಳುವವರ ಉತ್ಸಾಹ ಮತ್ತು ಅಧಿಕಾರದಲ್ಲಿರಲಿ, ಇಲ್ಲದೇ ಇರಲಿ ಸದಾ ನಿಮ್ಮ ಬೆಂಬಲಕ್ಕಿದ್ದೇವೆ ಎಂದು ಘೋಷಿಸುವ ಜನಪ್ರಿಯ ವಾಂಛೆಗಳ ಮೂಲಕ ದೃಢಪಡುತ್ತದೆ. ಆ ಮೂಲಕ ಧಾರ್ಮಿಕ ಜಡತ್ವ ಮತ್ತು ಜಾತಿ ವ್ಯವಸ್ಥೆ ಮತ್ತಷ್ಟು ನಿಚ್ಛಳವಾಗುತ್ತದೆ. ದಾರ್ಶನಿಕರ ವೈಚಾರಿಕ ಆಂದೋಲನಗಳು ಹರಡಿದ ಮನುಷ್ಯತ್ವದ ಪ್ರಭೆಯನ್ನು ತಡೆದು ವಿಚಿತ್ರ ಹಠದೊಂದಿಗೆ ರಾಜಕಾರಣವು ಕತ್ತಲನ್ನೇ ಶಾಶ್ವತವಾಗಿ ಪಸರಿಸಿಬಿಡುತ್ತದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ನಡೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಈ ಅಂಶ ಸ್ಪಷ್ಟವಾಗಿಬಿಡುತ್ತದೆ. ಆದರೆ ಹೀಗೆ ಸ್ಪಷ್ಟಪಡಿಸಿಕೊಳ್ಳುವ ಸಾಮೂಹಿಕ ಸಂಯಮ ಈಗ ಕಾಣೆಯಾಗಿದೆ.
ಆ ಸಾಮೂಹಿಕ ಸಂಯಮವಿಲ್ಲದಿದ್ದರೆ ಪ್ರಜೆಗಳೆನ್ನಿಸಿಕೊಂಡವರು ಬೆಲೆ ತೆರಲೇಬೇಕಾಗುತ್ತದೆ. ಸಮಸ್ಯೆಗಳನ್ನು ಸಹಿಸಿಕೊಳ್ಳುವುದಷ್ಟೇ ಅಲ್ಲದೇ ಅವುಗಳ ವರ್ತುಲದೊಳಗೆ ಸಿಲುಕಿಕೊಳ್ಳುವ ಅನಿವಾರ್ಯತೆಯ ಅಸಹಾಯಕತೆಯನ್ನೇ ಸಹಜಗುಣವಾಗಿಸಿಕೊಳ್ಳುವ ಉಮೇದಿನೊಂದಿಗೆ ಗುರುತಿಸಿಕೊಳ್ಳುವ ಒತ್ತಡವೂ ಸೃಷ್ಟಿಯಾಗುತ್ತದೆ. ಈ ಅಸಹಾಯಕತೆ ಎಷ್ಟು ಅಂತಸ್ಥವಾಗುತ್ತದೆ ಎಂದರೆ ಹೊಸದಾದ ಯಾವ ಚಿಂತನೆಯೂ ಒಪ್ಪಿತವೆನ್ನಿಸುವುದಿಲ್ಲ. ದೇಶೋದ್ಧಾರದ ಸಮಗ್ರ ಹೊಣೆಗಾರಿಕೆ ನಿಭಾಯಿಸಬೇಕಾದ ರಾಜಕೀಯ ಪಕ್ಷಗಳು ಜನರನ್ನು ಮತ್ತೆ ಅಸಹಾಯಕತೆಯ ಸಂಕುಚಿತ ಬಾವಿಯೊಳಗೆ ಬಂಧಿಸಿಡುವ ನಡೆಗಳೊಂದಿಗೆ ಇದ್ದುಬಿಡುವುದರ ಕಡೆಗೇ ಒಲವು ತೋರುತ್ತವೆ. ಈ ಕುರಿತ ಸುಳಿವುಗಳನ್ನು ಪಕ್ಷಗಳ ಮುಖಂಡರ ಹೇಳಿಕೆಗಳು, ಪ್ರತಿಹೇಳಿಕೆಗಳು, ಚುನಾವಣಾ ರಣತಂತ್ರಗಳನ್ನು ಸೂಕ್ಷ್ಮವಾಗಿ ಗಮನಿಸುವ ಮೂಲಕ ಗೊತ್ತುಮಾಡಿಕೊಳ್ಳಬಹುದು.
ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಡಳಿತಾರೂಢ ಪಕ್ಷ ತಂತ್ರ ಹೆಣೆಯುವುದರ ಕಡೆಗೆ ಆದ್ಯತೆ ನೀಡುತ್ತಿರುವ ವಿವರಗಳು ಗಮನಕ್ಕೆ ಬರುತ್ತಲೇ ಇವೆ. ರಾಷ್ಟ್ರಾದ್ಯಂತ ಪ್ರತಿರೋಧದ ಅಲೆಯನ್ನು ಎಬ್ಬಿಸಬೇಕು ಎಂಬ ಉದ್ದೇಶದೊಂದಿಗೆ ಅಖಾಡಕ್ಕಿಳಿದಿರುವ ವಿರೋಧ ಪಕ್ಷ ಅಸ್ಪಷ್ಟ, ದ್ವಂದ್ವ ನಿಲುವುಗಳೊಂದಿಗೇ ಹೆಜ್ಜೆಯಿರಿಸುತ್ತಿರುವ ಸಂಗತಿಯೂ ಗೊತ್ತಾಗುತ್ತಿದೆ. ವಿರೋಧ ಪಕ್ಷದ ಯುವನೇತಾರನಿಗೆ ಸಂಬಂಧಿಸಿದಂತಹ ವಾಟ್ಸ್ಯಾಪ್ ವೀಡಿಯೋವೊಂದು ಹಲವರಿಗೆ ರಂಜನೆ ನೀಡುತ್ತಿದೆ. ಆ ನೇತಾರನ ಬಿಂಬವು ರೈತನೊಬ್ಬನೊಂದಿಗೆ ಸಂಭಾಷಿಸುತ್ತದೆ. ಗದ್ದೆಯಲ್ಲೆಲ್ಲ ಕೆಸರು ಎಂಬ ರೈತನುಡಿಗೆ ಪ್ರತಿಯಾಗಿ ಆ ನೇತಾರಬಿಂಬವು ‘ನಾವು ಅಧಿಕಾರಕ್ಕೆ ಬಂದರೆ ಗದ್ದೆಯಲ್ಲಿ ಟೈಲ್ಸ್ ಹಾಕಿಸುತ್ತೇವೆ’ ಎನ್ನುತ್ತದೆ. ತಮಾಷೆಯೆನ್ನಿಸಿ ಆ ಕ್ಷಣಕ್ಕೆ ಖುಷಿ ಪಡಬಹುದಾದ ಈ ತರಹದ ವಿಡಿಯೋಗಳ ವೀಕ್ಷಿಸುವಿಕೆ ಮತ್ತು ಇನ್ನೊಬ್ಬರಿಗೆ ರವಾನಿಸುವಿಕೆಯ ಕಾರ್ಯಗಳಲ್ಲಿಯೇ ಜನರು ನಿರತರಾಗಿದ್ದಾರೆ. ಸೂಕ್ಷ್ಮವಾಗಿ ಗಮನಿಸಿದರೆ ಅಧಿಕಾರದಲ್ಲಿರುವವರು ಮತ್ತು ಅಧಿಕಾರದಲ್ಲಿರದೇ ಇರುವವರು ಪರಸ್ಪರರನ್ನು ಹೀಗೆ ರಂಜನೀಯವಾಗಿ ಕಾಲೆಳೆಯುತ್ತಾ ಜನರಿಗೆ ಖುಷಿ ನೀಡುತ್ತಾ ಈ ದೇಶದ ಬೆಳವಣಿಗೆಗೆ ಅಗತ್ಯವಾಗಿ ಆಗಬೇಕಾಗಿರುವುದು ಏನು ಎಂಬುದರ ಕುರಿತಾದ ತಾತ್ವಿಕ ಚರ್ಚೆಗಳ ಸಾಧ್ಯತೆಯನ್ನು ಉದ್ದೇಶಪೂರ್ವಕವಾಗಿ ತಡೆದುಬಿಡುತ್ತಿದ್ದಾರೆ. ಹೊಸ ಮಾಧ್ಯಮಗಳ ಪ್ರಭಾವ ಅವರ ಈ ಉದ್ದೇಶವನ್ನು ಈಡೇರಿಸಿಬಿಡುತ್ತಿದೆ. ಈ ಹಂತದಲ್ಲಿಯೇ ‘ನೀವ್ಯಾರ ಪರ’ ಎಂಬ ಪ್ರಶ್ನೆ ತಾರ್ಕಿಕತೆಯನ್ನು ಮುನ್ನೆಲೆಗೆ ತರುವ ಬದಲು ಆರಾಧನಾರೂಪದ ನಿಷ್ಠೆಯನ್ನು ನಿರೀಕ್ಷಿಸುತ್ತಿದೆ. ಆಡಳಿತಾರೂಢರ ಪರ ಎಂದರೆ ಸೇಫ್. ಇಲ್ಲದಿದ್ದರೆ ಗುಮಾನಿಗಳೇಳುತ್ತವೆ. ಮುಕ್ತವಾಗಿ ಸಮಸ್ಯೆ ಹೇಳಿಕೊಂಡಾಗಲೂ ಇಂಥವೇ ಗುಮಾನಿಗಳ ದಾಳಿಗೊಳಗಾಗುವ ಅಸಹಾಯಕತೆಗೆ ಪಕ್ಕಾಗಬೇಕಾಗುತ್ತದೆ. ಸಂವಿಧಾನದೊಳಗಿನ ಅಕ್ಷರಗಳು ಮತ್ತು ಅವುಗಳು ದಾಟಿಸುವ ಉದಾತ್ತ ಆಶಯಗಳು ಉಸಿರುಗಟ್ಟಿಸಿಕೊಳ್ಳುತ್ತವೆ. ಶಾಲಾ-ಕಾಲೇಜು ಹಂತಗಳಲ್ಲಿನ ಅಭಿಮಾನಿ ಮನೋಧರ್ಮ ದೊಡ್ಡವರಾದಾಗಲೂ ಉಳಿದುಕೊಂಡು ದೇಶವನ್ನೂ ಮತ್ತೆ ಮತ್ತೆ ಉಸಿರುಗಟ್ಟಿಸುತ್ತಿರುತ್ತದೆ.
(ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ
ಉಜಿರೆ
ಇ-ಮೇಲ್ ವಿಳಾಸ:
nkpadmanabh@gmail.com)

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ


