ರಾಜಕೀಯ
ರಾಜಕೀಯ ಪ್ರಜ್ಞೆ : ಭಾರತೀಯ ವಾಸ್ತವಿಕತೆ
ಪ್ರಾಥಮಿಕ ಹಂತದಲ್ಲಿ ಓದುತ್ತಿರುವ ಮಕ್ಕಳನ್ನು ಆಕರ್ಷಿಸುವವರು ಸಿನಿಮಾ ನಟ-ನಟಿಯರು. ಸ್ಟಾರ್ ನಟರುಗಳ ಫೈಟ್ಗಳನ್ನೇ ನೋಡಿ ಬಣಗಳನ್ನು ಕಟ್ಟಿಕೊಂಡು ‘ನಮ್ಮ ಹೀರೋ ಹೀಗೆ, ಹಾಗೆ’ ಅಂತೆಲ್ಲಾ ಅವರು ಮಾತನಾಡಿಕೊಳ್ಳುತ್ತಾರೆ. ಹಿಂದಿನ ದಿನ ಸಿನಿಮಾ ನೋಡಿದ ನಂತರ ಮರುದಿನ ಆ ಬಗ್ಗೆ ಹೇಳಿಕೊಳ್ಳುವುದೆಂದರೆ ಅವರಿಗೆ ಪ್ರತಿಷ್ಠೆ. ಕಥೆಗಿಂತ ಫೈಟ್ಗಳ ವರ್ಣನೆಗೇ ಉತ್ಸಾಹ ಮೀಸಲು. ಒಬ್ಬ ಹೀರೋ ಫೈಟ್ ಬಗ್ಗೆ ಹೇಳಿಕೊಳ್ಳುವಾಗಲೇ ಇನ್ನೊಬ್ಬ ಹೀರೋನ ಅಭಿಮಾನಿ ಸ್ನೇಹಿತ ತಕರಾರು ಎತ್ತಿ ‘ನಮ್ಮ ಹೀರೋ ಮುಂದೆ ನಿಮ್ಮ ಹೀರೋ ಜೀರೋ’ ಎಂದ ಕೂಡಲೇ ಜಗಳ ತಾರಕಕ್ಕೇರುತ್ತದೆ. ಮಾತು ಬಿಡುವುದು, ಎಷ್ಟೋ ದಿವಸಗಳ ನಂತರ ಮತ್ತೆ ಮಾತನಾಡುವುದು, ಒಂದಷ್ಟು ಮುನಿಸು, ದ್ವೇಷ, ಸ್ನೇಹಗಳ ಮೂಲಗಳಾಗಿ ಆ ದಿನಗಳು ಕಳೆದುಹೋಗುತ್ತವೆ. ಅವರೊಳಗಿನ ಮುಗ್ಧತೆಯ ಕಾರಣಕ್ಕಾಗಿಯೇ ಅವರು ಮತ್ತೆ ಮಾತನಾಡಿಕೊಳ್ಳುತ್ತಾರೆ. ಸ್ನೇಹವನ್ನು ಉಳಿಸಿಕೊಳ್ಳುತ್ತಾರೆ. ಆ ಮುಗ್ಧತೆಯೊಂದಿಗೇ ಬೆಳವಣಿಗೆಯ ವಿವಿಧ ಹಂತಗಳು ದಾಟಿಕೊಂಡರೆ ಅವರು ಸರಿಯಾಗಿ ಆಲೋಚಿಸುವುದರ ಕಡೆಗೆ ವಾಲಿಕೊಳ್ಳುತ್ತಾರೆ. ಹಾಗಿದ್ದಾಗಲೇ ಪ್ರಶ್ನಿಸುವ ಸಹಜ ಪ್ರವೃತ್ತಿ ಜೀವಂತವಾಗಿರುತ್ತದೆ. ಮುಕ್ತಚಿಂತನೆಯ ಕಡೆಗಿನ ಹಾದಿ ತೆರೆದುಕೊಳ್ಳುತ್ತದೆ. ಆದರೆ, ಸಿನಿಮಾದೊಂದಿಗಿನ ಭಾವುಕ ನಂಟು ಕ್ರಮೇಣ ಅವರೊಳಗೆ ಅಂಧಾಭಿಮಾನ ಸೃಷ್ಟಿಸಿಬಿಡುತ್ತದೆ.
ಕಟೌಟ್, ಅದರ ಮೇಲೆ ಕ್ಷೀರಧಾರೆ ಎರೆಯುವ ಆರಾಧನಾ ಮನಸ್ಥಿತಿಯೂ ಹೀಗೆಯೇ ರೂಪುಗೊಳ್ಳುತ್ತದೆ. ಸಿನಿಮಾಭಿಮಾನ ಮತ್ತು ಸ್ಟಾರ್ ನಟರುಗಳನ್ನು ಆರಾಧಿಸುವ ಅಂಧಾಭಿಮಾನದ ಈ ಬಗೆಯ ಅತಿರೇಕದ ಮನೋಭಾವವನ್ನೇ ಜನಸಮೂಹದ ಆದ್ಯಗುಣಲಕ್ಷಣವಾಗಿಸಿಬಿಡುವ ಚಾಣಾಕ್ಷ ತಂತ್ರಗಾರಿಕೆಯನ್ನು ಭಾರತದ ರಾಜಕಾರಣ ಅತ್ಯಂತ ಚಾಣಾಕ್ಷಯುತವಾಗಿ ಪ್ರಯೋಗಿಸುತ್ತಿದೆ. ಮುಗ್ಧತೆ ಮತ್ತು ಸ್ನೇಹದ ವೈಶಾಲ್ಯತೆಯನ್ನು ಮೊಟಕುಗೊಳಿಸಿ ದೊಡ್ಡವರನ್ನು ಸಂಕುಚಿತರನ್ನಾಗಿಸುವ ರಾಜಕೀಯ ಸನ್ನಿವೇಶವನ್ನು ಅದು ಉದ್ದೇಶಪೂರ್ವಕವಾಗಿ ಸೃಷ್ಟಿಸುತ್ತಿದೆ. ಸರಿಯಾದ ರಾಜಕೀಯ ಪ್ರಜ್ಞೆಯನ್ನು ಆವಾಹಿಸಿಕೊಳ್ಳುವ ತುಡಿತವನ್ನೇ ಇಲ್ಲವಾಗಿಸಿಬಿಡುತ್ತಿದೆ. ತಮ್ಮ ಪ್ರಭಾವದ ಭರಾಟೆಯ ಅಲೆಯೊಂದಿಗೆ ಇಡೀ ಸಮಾಜದೊಳಗಿನ ಜನರ ಮನೋಶಿಲ್ಪವನ್ನು ಸಡಿಲಗೊಳಿಸಿ ದುರ್ಬಲಗೊಳಿಸುತ್ತಿರುವ ಮೂರು ಜನಪ್ರಿಯ ಕ್ಷೇತ್ರಗಳೆಂದರೆ ಸಿನಿಮಾ, ರಾಜಕಾರಣ ಮತ್ತು ಕ್ರಿಕೆಟ್. ಜನಪ್ರಿಯ ಸಿನಿಮಾಗಳು ಮತ್ತು ಕ್ರಿಕೆಟ್ ಉದ್ಯಮ ಇವೆರಡೂ ಉಂಟುಮಾಡುವ ಪ್ರಭಾವದ ಆವರಣದ ನಡುವೆಯೇ ರಾಜಕಾರಣ ತನ್ನನ್ನು ಪ್ರತಿಷ್ಠಾಪಿಸಿಕೊಳ್ಳುವ ತಂತ್ರಗಳನ್ನು ಹೆಣೆದುಕೊಳ್ಳುತ್ತದೆ. ಆ ತಂತ್ರಗಳು ಯಶಸ್ವಿಯಾಗಲೇಬೇಕು ಎಂಬ ಹಠದೊಂದಿಗೇ ಹೆಜ್ಜೆಯಿರಿಸುತ್ತದೆ. ಎದುರುಗೊಳ್ಳುವವರನ್ನು ಹಣಿಯುವ ನಿಗೂಢ ಕಾರ್ಯಸೂಚಿಗಳನ್ನು ಸಂದರ್ಭಕ್ಕೆ ಅನುಗುಣವಾಗಿ ರೂಪಿಸಿಕೊಂಡುಬಿಡುತ್ತದೆ. ಪರ್ಯಾಯ ನಾಯಕತ್ವದ ಉದಾತ್ತ ಅವಕಾಶಗಳನ್ನು ಹೊಸಕಿಹಾಕಿ ಜನರಿಂದ ಆಯ್ಕೆಯ ಐಚ್ಛಿಕತೆಯನ್ನೇ ಕಿತ್ತುಕೊಂಡುಬಿಡುತ್ತದೆ. ‘ಇವರಿಲ್ಲದಿದ್ದರೆ ಮತ್ತಿನ್ಯಾರು ಆಳುವವರು’ ಎಂಬ ಅವಲಂಬನಾ ದೃಷ್ಟಿಕೋನವನ್ನು ಅದೇ ಜನವಲಯದಲ್ಲಿಯೇ ನೆಲೆಗೊಳಿಸಿಬಿಡುತ್ತದೆ. ನಾಯಕರಲ್ಲದ ನಾಯಕರೆನ್ನಿಸಿಕೊಂಡವರನ್ನು ಆರಾಧಿಸುವವರ ಸಂಖ್ಯಾಬಾಹುಳ್ಯ ಹೆಚ್ಚಿಸಿಕೊಳ್ಳುತ್ತಲೇ ತನ್ನ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿರುತ್ತದೆ. ಆಗಲೇ ಜನರು ಮುಗ್ಧವಾಗಿ ನಂಬುತ್ತಲೇ ತಮ್ಮ ಯೋಚನೆಯ ಶಕ್ತಿಯನ್ನೇ ತ್ಯಜಿಸಿಬಿಡುತ್ತಾರೆ.
ತಾರ್ಕಿಕವೆನ್ನಿಸುವ ಪ್ರಜಾಸತ್ತಾತ್ಮಕ ವೈಚಾರಿಕ ಎಚ್ಚರದಲ್ಲಿ ರಾಜಕಾರಣವನ್ನು ಗ್ರಹಿಸುವ ಬದಲು ಹೊಗಳಿಕೆಗಳ ಅಭಿಪ್ರಾಯಗಳನ್ನು ಹೇಳಿಕೊಳ್ಳುವುದಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಳ್ಳುತ್ತಾರೆ.
ಉನ್ನತ ಹುದ್ದೆಯಲ್ಲಿರುವ ಇಬ್ಬರು ಸ್ನೇಹಿತರ ನಡುವೆ ರಾಜಕಾರಣದ ಬಗ್ಗೆ ಚರ್ಚೆ ಶುರುವಾಗುತ್ತದೆ. ಒಬ್ಬರು ಸರ್ಕಾರವನ್ನು ಆರಾಧಿಸಿ ಮಾತನಾಡಿದರೆ ಮತ್ತೊಬ್ಬರು ಪ್ರಶ್ನೆಗಳನ್ನೆತ್ತಿ ಪ್ರತಿರೋಧದ ಮಾತುಗಳನ್ನಾಡುತ್ತಾರೆ.ಪ್ರತಿರೋಧವನ್ನೊಡ್ಡಿದವರು ಯಾರೇ ಅಧಿಕಾರಕ್ಕೆ ಬರಲಿ, ಅವರನ್ನು ಪ್ರಶ್ನಿಸುವ ಹಕ್ಕನ್ನು ನಾವೆಲ್ಲರೂ ಉಳಿಸಿಕೊಳ್ಳಲೇಬೇಕು ಎಂಬ ಅನಿವಾರ್ಯತೆಯನ್ನು ಮನಗಾಣಿಸಲು ಪ್ರಯತ್ನಿಸುತ್ತಾರೆ. ಆದರೆ, ಸರ್ಕಾರದ ಬಗ್ಗೆ ಆರಾಧನಾ ಮನೋಭಾವವಿರುವ ಸ್ನೇಹಿತ ಮಾತನಾಡುತ್ತಾ ಆಡುತ್ತಾ ಭಾವುಕ ವ್ಯಗ್ರತೆಯನ್ನು ಪ್ರದರ್ಶಿಸಲಾರಂಭಿಸುತ್ತಾನೆ. ಪ್ರತಿರೋಧಧ ವಿಚಾರಗಳನ್ನು ಪ್ರಸ್ತಾಪಿಸಿದ ಮಿತ್ರನ ಸಂಯಮದ ಸಂವಾದಕ್ಕೆ ಪ್ರತಿಯಾಗಿ ವಿತಂಡವಾದ ಮುಂದಿಡಲಾರಂಭಿಸುತ್ತಾನೆ. ತಾರ್ಕಿಕ ಪ್ರಶ್ನೆಗಳಿಗೆ ಉತ್ತರಿಸಲಾಗದೇ ವ್ಯಕ್ತಿಗತ ಆರೋಪಗಳನ್ನು ಹೊರಿಸುವ ತಂತ್ರ ಅನುಸರಿಸುತ್ತಾನೆ. ಆ ಮೂಲಕ ತಾರ್ಕಿಕ ವೈಚಾರಿಕತೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಾನೆ. ಆ ಹೊತ್ತಿಗೆ ಇಬ್ಬರ ನಡುವೆ ಸೃಷ್ಟಿಯಾದ ಭಿನ್ನಾಭಿಪ್ರಾಯ ದ್ವೇಷಕ್ಕೆ ತಿರುಗುತ್ತದೆ. ಆ ದ್ವೇಷವು ಮುಂದುವರೆದು ಸ್ನೇಹ ಕೊನೆಗೊಳ್ಳುತ್ತದೆ. ರಾಜಕೀಯ ಪಕ್ಷಗಳು ತಮ್ಮೊಳಗಿನ ಅಧಿಕಾರದ ಹಸಿವನ್ನು ನೀಗಿಸಿಕೊಳ್ಳಲು ಇಂಥದ್ದೇ ಆದ ಮನೋವೈಕಲ್ಯವನ್ನು ನಿರೀಕ್ಷಿಸುತ್ತವೆ. ಇದನ್ನು ಸಾಮೂಹಿಕ ಗುಣಲಕ್ಷಣವಾಗಿಸಿ ತಮ್ಮ ಅಧಿಕಾರದ ಫಸಲು ತೆಗೆಯುವ ಉದ್ದೇಶ ಈಡೇರಿಸಿಕೊಳ್ಳುತ್ತವೆ. ನಿಜವಾದ ರಾಜಕೀಯ ಪ್ರಜ್ಞೆಯನ್ನು ಕೊಲೆಗೈದು ತಮ್ಮನ್ನು ವಿಜೃಂಭಿಸಿಕೊಳ್ಳುತ್ತವೆ.
ಪ್ರಸಕ್ತ ರಾಜಕೀಯ ವ್ಯವಸ್ಥೆಯ ಎಲ್ಲ ಮಿತಿಗಳನ್ನು ರಂಜನೀಯ ನೆಲೆಯಲ್ಲಿ ಸ್ವೀಕರಿಸುವ ವಿಚಿತ್ರವಾದ ಸಮೂಹಕೇಂದ್ರಿತ ಊನ ( Mass Syndrome)ಈಗಾಗಲೇ ವ್ಯಾಪಕವಾಗಿಬಿಟ್ಟಿದೆ. ನಮ್ಮಲ್ಲಿ ಅಧಿಕಾರ ರಾಜಕಾರಣದ ಕುರಿತಾದ ಚರ್ಚೆಗಳು ಇದರ ಸಂಕುಚಿತ ಜಾಲದ ಪರಿಧಿಯನ್ನು ದಾಟಿಕೊಳ್ಳುವುದೇ ಇಲ್ಲ. ಹಾಗೆ ದಾಟಿಕೊಳ್ಳದ ಹಾಗೆ ವಿತಂಡವಾದಿ ದೃಷ್ಟಿಕೋನಗಳು ಕಡಿವಾಣ ಬಿಗಿದುಬಿಡುತ್ತವೆ. ರಾಜಕಾರಣದೊಳಗಿನ ಊನಗಳೊಂದಿಗಿನ ಸಾಂಪ್ರದಾಯಿಕತೆಯನ್ನೇ ಮೌಲ್ಯವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ಬೇರೂರಿಸಿಬಿಡುತ್ತವೆ. ದೇಶವೊಂದರೊಳಗೆ ಸಾಮಾಜಿಕ ವ್ಯವಸ್ಥೆಯೊಂದಿರುತ್ತದೆ. ಆಡಳಿತಾರೂಢ ಸರ್ಕಾರವು ಜಪಿಸುವ ಅಭಿವೃದ್ಧಿಯ ಮಂತ್ರದೊಂದಿಗೆ ತಳುಕು ಹಾಕಿಕೊಂಡ ಆರ್ಥಿಕತೆಯು ಈ ಸಾಮಾಜಿಕ ವ್ಯವಸ್ಥೆಯ ರೂಪು-ರೇಷೆಗಳಿಗೆ ಅನುಗುಣವಾಗಿರಬೇಕು ಎಂಬ ಕನಿಷ್ಠ ಪ್ರಜ್ಞೆಯನ್ನು ಆಧರಿಸಿಯೇ ಇರುವುದಿಲ್ಲ. ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಹೆಚ್ಚಿಸುವಂತೆಯೇ ಆ ಆರ್ಥಿಕ ವ್ಯವಸ್ಥೆ ಬಲಿಷ್ಠವಾಗುತ್ತ ಸಾಗುತ್ತದೆ.
ಉಳ್ಳವರ ಪರವಾದ ಅರ್ಥವ್ಯವಸ್ಥೆಯ ಪ್ರಾಬಲ್ಯವನ್ನು ಮತ್ತಷ್ಟು ಹೆಚ್ಚಿಸುವುದರ ಕಡೆಗೆ ರಾಜಕಾರಣ ತನ್ನ ಗಮನವನ್ನು ಕೇಂದ್ರೀಕರಿಸುತ್ತದೆ. ಇಲ್ಲಿ ವ್ಯಕ್ತಿಗತ ಮಾನವ ಸಂಪನ್ಮೂಲದ ಸಮಗ್ರ ಅನ್ವಯಿಸುವಿಕೆಯ ಪರಿಕಲ್ಪನೆಗಳಿಗೆ ಆದ್ಯತೆ ಇರುವುದೇ ಇಲ್ಲ. ಸಾಮಾಜಿಕ ವ್ಯವಸ್ಥೆಯೊಳಗಿನ ಧಾರ್ಮಿಕತೆ ಮತ್ತು ಅದಕ್ಕನುಗುಣವಾಗಿಯೇ ಬೇರೂರಿಬಿಟ್ಟಿರುವ ಜಾತಿ-ಪಂಗಡಗಳ ಸಂಕೀರ್ಣ ಆವೃತ್ತಿಗಳು ಸಾಮಾಜಿಕ ಉದ್ಯಮಗಳಾಗಿಯೇ ಬೆಳೆಯುತ್ತಿರುತ್ತವೆ. ಅವುಗಳ ಸಮಾಜೋ-ಧಾರ್ಮಿಕ ಔದ್ಯಮಿಕತೆಯು ಮಠೀಯತೆ, ಮಠಾಧೀಶ ಮುಂದಾಳತ್ವ, ನಮ್ಮ ಜಾತಿಯವರಿಷ್ಟಿದ್ದೇವೆ ಎಂದು ತೋರಿಸಿಕೊಳ್ಳುವ ಬೃಹತ್ ಸಮಾವೇಶಗಳು, ಅವುಗಳಲ್ಲಿ ಭಾಗವಹಿಸಿ ತಮ್ಮ ಟೊಳ್ಳು ಮುಖಂಡತ್ವವನ್ನು ಮತ್ತೊಮ್ಮೆ ನವೀಕರಿಸಿಕೊಳ್ಳುವವರ ಉತ್ಸಾಹ ಮತ್ತು ಅಧಿಕಾರದಲ್ಲಿರಲಿ, ಇಲ್ಲದೇ ಇರಲಿ ಸದಾ ನಿಮ್ಮ ಬೆಂಬಲಕ್ಕಿದ್ದೇವೆ ಎಂದು ಘೋಷಿಸುವ ಜನಪ್ರಿಯ ವಾಂಛೆಗಳ ಮೂಲಕ ದೃಢಪಡುತ್ತದೆ. ಆ ಮೂಲಕ ಧಾರ್ಮಿಕ ಜಡತ್ವ ಮತ್ತು ಜಾತಿ ವ್ಯವಸ್ಥೆ ಮತ್ತಷ್ಟು ನಿಚ್ಛಳವಾಗುತ್ತದೆ. ದಾರ್ಶನಿಕರ ವೈಚಾರಿಕ ಆಂದೋಲನಗಳು ಹರಡಿದ ಮನುಷ್ಯತ್ವದ ಪ್ರಭೆಯನ್ನು ತಡೆದು ವಿಚಿತ್ರ ಹಠದೊಂದಿಗೆ ರಾಜಕಾರಣವು ಕತ್ತಲನ್ನೇ ಶಾಶ್ವತವಾಗಿ ಪಸರಿಸಿಬಿಡುತ್ತದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ನಡೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಈ ಅಂಶ ಸ್ಪಷ್ಟವಾಗಿಬಿಡುತ್ತದೆ. ಆದರೆ ಹೀಗೆ ಸ್ಪಷ್ಟಪಡಿಸಿಕೊಳ್ಳುವ ಸಾಮೂಹಿಕ ಸಂಯಮ ಈಗ ಕಾಣೆಯಾಗಿದೆ.
ಆ ಸಾಮೂಹಿಕ ಸಂಯಮವಿಲ್ಲದಿದ್ದರೆ ಪ್ರಜೆಗಳೆನ್ನಿಸಿಕೊಂಡವರು ಬೆಲೆ ತೆರಲೇಬೇಕಾಗುತ್ತದೆ. ಸಮಸ್ಯೆಗಳನ್ನು ಸಹಿಸಿಕೊಳ್ಳುವುದಷ್ಟೇ ಅಲ್ಲದೇ ಅವುಗಳ ವರ್ತುಲದೊಳಗೆ ಸಿಲುಕಿಕೊಳ್ಳುವ ಅನಿವಾರ್ಯತೆಯ ಅಸಹಾಯಕತೆಯನ್ನೇ ಸಹಜಗುಣವಾಗಿಸಿಕೊಳ್ಳುವ ಉಮೇದಿನೊಂದಿಗೆ ಗುರುತಿಸಿಕೊಳ್ಳುವ ಒತ್ತಡವೂ ಸೃಷ್ಟಿಯಾಗುತ್ತದೆ. ಈ ಅಸಹಾಯಕತೆ ಎಷ್ಟು ಅಂತಸ್ಥವಾಗುತ್ತದೆ ಎಂದರೆ ಹೊಸದಾದ ಯಾವ ಚಿಂತನೆಯೂ ಒಪ್ಪಿತವೆನ್ನಿಸುವುದಿಲ್ಲ. ದೇಶೋದ್ಧಾರದ ಸಮಗ್ರ ಹೊಣೆಗಾರಿಕೆ ನಿಭಾಯಿಸಬೇಕಾದ ರಾಜಕೀಯ ಪಕ್ಷಗಳು ಜನರನ್ನು ಮತ್ತೆ ಅಸಹಾಯಕತೆಯ ಸಂಕುಚಿತ ಬಾವಿಯೊಳಗೆ ಬಂಧಿಸಿಡುವ ನಡೆಗಳೊಂದಿಗೆ ಇದ್ದುಬಿಡುವುದರ ಕಡೆಗೇ ಒಲವು ತೋರುತ್ತವೆ. ಈ ಕುರಿತ ಸುಳಿವುಗಳನ್ನು ಪಕ್ಷಗಳ ಮುಖಂಡರ ಹೇಳಿಕೆಗಳು, ಪ್ರತಿಹೇಳಿಕೆಗಳು, ಚುನಾವಣಾ ರಣತಂತ್ರಗಳನ್ನು ಸೂಕ್ಷ್ಮವಾಗಿ ಗಮನಿಸುವ ಮೂಲಕ ಗೊತ್ತುಮಾಡಿಕೊಳ್ಳಬಹುದು.
ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಡಳಿತಾರೂಢ ಪಕ್ಷ ತಂತ್ರ ಹೆಣೆಯುವುದರ ಕಡೆಗೆ ಆದ್ಯತೆ ನೀಡುತ್ತಿರುವ ವಿವರಗಳು ಗಮನಕ್ಕೆ ಬರುತ್ತಲೇ ಇವೆ. ರಾಷ್ಟ್ರಾದ್ಯಂತ ಪ್ರತಿರೋಧದ ಅಲೆಯನ್ನು ಎಬ್ಬಿಸಬೇಕು ಎಂಬ ಉದ್ದೇಶದೊಂದಿಗೆ ಅಖಾಡಕ್ಕಿಳಿದಿರುವ ವಿರೋಧ ಪಕ್ಷ ಅಸ್ಪಷ್ಟ, ದ್ವಂದ್ವ ನಿಲುವುಗಳೊಂದಿಗೇ ಹೆಜ್ಜೆಯಿರಿಸುತ್ತಿರುವ ಸಂಗತಿಯೂ ಗೊತ್ತಾಗುತ್ತಿದೆ. ವಿರೋಧ ಪಕ್ಷದ ಯುವನೇತಾರನಿಗೆ ಸಂಬಂಧಿಸಿದಂತಹ ವಾಟ್ಸ್ಯಾಪ್ ವೀಡಿಯೋವೊಂದು ಹಲವರಿಗೆ ರಂಜನೆ ನೀಡುತ್ತಿದೆ. ಆ ನೇತಾರನ ಬಿಂಬವು ರೈತನೊಬ್ಬನೊಂದಿಗೆ ಸಂಭಾಷಿಸುತ್ತದೆ. ಗದ್ದೆಯಲ್ಲೆಲ್ಲ ಕೆಸರು ಎಂಬ ರೈತನುಡಿಗೆ ಪ್ರತಿಯಾಗಿ ಆ ನೇತಾರಬಿಂಬವು ‘ನಾವು ಅಧಿಕಾರಕ್ಕೆ ಬಂದರೆ ಗದ್ದೆಯಲ್ಲಿ ಟೈಲ್ಸ್ ಹಾಕಿಸುತ್ತೇವೆ’ ಎನ್ನುತ್ತದೆ. ತಮಾಷೆಯೆನ್ನಿಸಿ ಆ ಕ್ಷಣಕ್ಕೆ ಖುಷಿ ಪಡಬಹುದಾದ ಈ ತರಹದ ವಿಡಿಯೋಗಳ ವೀಕ್ಷಿಸುವಿಕೆ ಮತ್ತು ಇನ್ನೊಬ್ಬರಿಗೆ ರವಾನಿಸುವಿಕೆಯ ಕಾರ್ಯಗಳಲ್ಲಿಯೇ ಜನರು ನಿರತರಾಗಿದ್ದಾರೆ. ಸೂಕ್ಷ್ಮವಾಗಿ ಗಮನಿಸಿದರೆ ಅಧಿಕಾರದಲ್ಲಿರುವವರು ಮತ್ತು ಅಧಿಕಾರದಲ್ಲಿರದೇ ಇರುವವರು ಪರಸ್ಪರರನ್ನು ಹೀಗೆ ರಂಜನೀಯವಾಗಿ ಕಾಲೆಳೆಯುತ್ತಾ ಜನರಿಗೆ ಖುಷಿ ನೀಡುತ್ತಾ ಈ ದೇಶದ ಬೆಳವಣಿಗೆಗೆ ಅಗತ್ಯವಾಗಿ ಆಗಬೇಕಾಗಿರುವುದು ಏನು ಎಂಬುದರ ಕುರಿತಾದ ತಾತ್ವಿಕ ಚರ್ಚೆಗಳ ಸಾಧ್ಯತೆಯನ್ನು ಉದ್ದೇಶಪೂರ್ವಕವಾಗಿ ತಡೆದುಬಿಡುತ್ತಿದ್ದಾರೆ. ಹೊಸ ಮಾಧ್ಯಮಗಳ ಪ್ರಭಾವ ಅವರ ಈ ಉದ್ದೇಶವನ್ನು ಈಡೇರಿಸಿಬಿಡುತ್ತಿದೆ. ಈ ಹಂತದಲ್ಲಿಯೇ ‘ನೀವ್ಯಾರ ಪರ’ ಎಂಬ ಪ್ರಶ್ನೆ ತಾರ್ಕಿಕತೆಯನ್ನು ಮುನ್ನೆಲೆಗೆ ತರುವ ಬದಲು ಆರಾಧನಾರೂಪದ ನಿಷ್ಠೆಯನ್ನು ನಿರೀಕ್ಷಿಸುತ್ತಿದೆ. ಆಡಳಿತಾರೂಢರ ಪರ ಎಂದರೆ ಸೇಫ್. ಇಲ್ಲದಿದ್ದರೆ ಗುಮಾನಿಗಳೇಳುತ್ತವೆ. ಮುಕ್ತವಾಗಿ ಸಮಸ್ಯೆ ಹೇಳಿಕೊಂಡಾಗಲೂ ಇಂಥವೇ ಗುಮಾನಿಗಳ ದಾಳಿಗೊಳಗಾಗುವ ಅಸಹಾಯಕತೆಗೆ ಪಕ್ಕಾಗಬೇಕಾಗುತ್ತದೆ. ಸಂವಿಧಾನದೊಳಗಿನ ಅಕ್ಷರಗಳು ಮತ್ತು ಅವುಗಳು ದಾಟಿಸುವ ಉದಾತ್ತ ಆಶಯಗಳು ಉಸಿರುಗಟ್ಟಿಸಿಕೊಳ್ಳುತ್ತವೆ. ಶಾಲಾ-ಕಾಲೇಜು ಹಂತಗಳಲ್ಲಿನ ಅಭಿಮಾನಿ ಮನೋಧರ್ಮ ದೊಡ್ಡವರಾದಾಗಲೂ ಉಳಿದುಕೊಂಡು ದೇಶವನ್ನೂ ಮತ್ತೆ ಮತ್ತೆ ಉಸಿರುಗಟ್ಟಿಸುತ್ತಿರುತ್ತದೆ.
(ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ
ಉಜಿರೆ
ಇ-ಮೇಲ್ ವಿಳಾಸ:
nkpadmanabh@gmail.com)

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಲ್ಲದೆ, ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಸುಮಾರು 24000 ಪೌತಿ ಖಾತೆಗಳನ್ನು ಬದಲಾಯಿಸಲಾಗಿದ್ದು, ಪೌತಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಜಮೀನು ಮಂಜೂರು ಆಗಿ ಪೋಡಿ ಆಗದೇ ಪ್ರತ್ಯೇಕ ಪಹಣಿ ಬರದೇ ಇರುವುದರಿಂದ ಅಂತಹವುಗಳನ್ನು ಗೈರು ವಿಲೇ ಕಡತವನ್ನು ಮಾಡಲಾಗಿದ್ದು, ಸುಮಾರು 4000 ಜನರಿಗೆ ಈ ಗೈರು ವಿಲೇ ಕಡತವನ್ನು ನೀಡಲಾಗಿದೆ. ರಾಜ್ಯದಲ್ಲಿ ನಮ್ಮ ಜಿಲ್ಲೆಯೂ 3ನೇ ಸ್ಥಾನವನ್ನು ಹೊಂದಲಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243



