ರಾಜಕೀಯ
ರಾಜಕೀಯ ಪ್ರಜ್ಞೆ : ಭಾರತೀಯ ವಾಸ್ತವಿಕತೆ
ಪ್ರಾಥಮಿಕ ಹಂತದಲ್ಲಿ ಓದುತ್ತಿರುವ ಮಕ್ಕಳನ್ನು ಆಕರ್ಷಿಸುವವರು ಸಿನಿಮಾ ನಟ-ನಟಿಯರು. ಸ್ಟಾರ್ ನಟರುಗಳ ಫೈಟ್ಗಳನ್ನೇ ನೋಡಿ ಬಣಗಳನ್ನು ಕಟ್ಟಿಕೊಂಡು ‘ನಮ್ಮ ಹೀರೋ ಹೀಗೆ, ಹಾಗೆ’ ಅಂತೆಲ್ಲಾ ಅವರು ಮಾತನಾಡಿಕೊಳ್ಳುತ್ತಾರೆ. ಹಿಂದಿನ ದಿನ ಸಿನಿಮಾ ನೋಡಿದ ನಂತರ ಮರುದಿನ ಆ ಬಗ್ಗೆ ಹೇಳಿಕೊಳ್ಳುವುದೆಂದರೆ ಅವರಿಗೆ ಪ್ರತಿಷ್ಠೆ. ಕಥೆಗಿಂತ ಫೈಟ್ಗಳ ವರ್ಣನೆಗೇ ಉತ್ಸಾಹ ಮೀಸಲು. ಒಬ್ಬ ಹೀರೋ ಫೈಟ್ ಬಗ್ಗೆ ಹೇಳಿಕೊಳ್ಳುವಾಗಲೇ ಇನ್ನೊಬ್ಬ ಹೀರೋನ ಅಭಿಮಾನಿ ಸ್ನೇಹಿತ ತಕರಾರು ಎತ್ತಿ ‘ನಮ್ಮ ಹೀರೋ ಮುಂದೆ ನಿಮ್ಮ ಹೀರೋ ಜೀರೋ’ ಎಂದ ಕೂಡಲೇ ಜಗಳ ತಾರಕಕ್ಕೇರುತ್ತದೆ. ಮಾತು ಬಿಡುವುದು, ಎಷ್ಟೋ ದಿವಸಗಳ ನಂತರ ಮತ್ತೆ ಮಾತನಾಡುವುದು, ಒಂದಷ್ಟು ಮುನಿಸು, ದ್ವೇಷ, ಸ್ನೇಹಗಳ ಮೂಲಗಳಾಗಿ ಆ ದಿನಗಳು ಕಳೆದುಹೋಗುತ್ತವೆ. ಅವರೊಳಗಿನ ಮುಗ್ಧತೆಯ ಕಾರಣಕ್ಕಾಗಿಯೇ ಅವರು ಮತ್ತೆ ಮಾತನಾಡಿಕೊಳ್ಳುತ್ತಾರೆ. ಸ್ನೇಹವನ್ನು ಉಳಿಸಿಕೊಳ್ಳುತ್ತಾರೆ. ಆ ಮುಗ್ಧತೆಯೊಂದಿಗೇ ಬೆಳವಣಿಗೆಯ ವಿವಿಧ ಹಂತಗಳು ದಾಟಿಕೊಂಡರೆ ಅವರು ಸರಿಯಾಗಿ ಆಲೋಚಿಸುವುದರ ಕಡೆಗೆ ವಾಲಿಕೊಳ್ಳುತ್ತಾರೆ. ಹಾಗಿದ್ದಾಗಲೇ ಪ್ರಶ್ನಿಸುವ ಸಹಜ ಪ್ರವೃತ್ತಿ ಜೀವಂತವಾಗಿರುತ್ತದೆ. ಮುಕ್ತಚಿಂತನೆಯ ಕಡೆಗಿನ ಹಾದಿ ತೆರೆದುಕೊಳ್ಳುತ್ತದೆ. ಆದರೆ, ಸಿನಿಮಾದೊಂದಿಗಿನ ಭಾವುಕ ನಂಟು ಕ್ರಮೇಣ ಅವರೊಳಗೆ ಅಂಧಾಭಿಮಾನ ಸೃಷ್ಟಿಸಿಬಿಡುತ್ತದೆ.
ಕಟೌಟ್, ಅದರ ಮೇಲೆ ಕ್ಷೀರಧಾರೆ ಎರೆಯುವ ಆರಾಧನಾ ಮನಸ್ಥಿತಿಯೂ ಹೀಗೆಯೇ ರೂಪುಗೊಳ್ಳುತ್ತದೆ. ಸಿನಿಮಾಭಿಮಾನ ಮತ್ತು ಸ್ಟಾರ್ ನಟರುಗಳನ್ನು ಆರಾಧಿಸುವ ಅಂಧಾಭಿಮಾನದ ಈ ಬಗೆಯ ಅತಿರೇಕದ ಮನೋಭಾವವನ್ನೇ ಜನಸಮೂಹದ ಆದ್ಯಗುಣಲಕ್ಷಣವಾಗಿಸಿಬಿಡುವ ಚಾಣಾಕ್ಷ ತಂತ್ರಗಾರಿಕೆಯನ್ನು ಭಾರತದ ರಾಜಕಾರಣ ಅತ್ಯಂತ ಚಾಣಾಕ್ಷಯುತವಾಗಿ ಪ್ರಯೋಗಿಸುತ್ತಿದೆ. ಮುಗ್ಧತೆ ಮತ್ತು ಸ್ನೇಹದ ವೈಶಾಲ್ಯತೆಯನ್ನು ಮೊಟಕುಗೊಳಿಸಿ ದೊಡ್ಡವರನ್ನು ಸಂಕುಚಿತರನ್ನಾಗಿಸುವ ರಾಜಕೀಯ ಸನ್ನಿವೇಶವನ್ನು ಅದು ಉದ್ದೇಶಪೂರ್ವಕವಾಗಿ ಸೃಷ್ಟಿಸುತ್ತಿದೆ. ಸರಿಯಾದ ರಾಜಕೀಯ ಪ್ರಜ್ಞೆಯನ್ನು ಆವಾಹಿಸಿಕೊಳ್ಳುವ ತುಡಿತವನ್ನೇ ಇಲ್ಲವಾಗಿಸಿಬಿಡುತ್ತಿದೆ. ತಮ್ಮ ಪ್ರಭಾವದ ಭರಾಟೆಯ ಅಲೆಯೊಂದಿಗೆ ಇಡೀ ಸಮಾಜದೊಳಗಿನ ಜನರ ಮನೋಶಿಲ್ಪವನ್ನು ಸಡಿಲಗೊಳಿಸಿ ದುರ್ಬಲಗೊಳಿಸುತ್ತಿರುವ ಮೂರು ಜನಪ್ರಿಯ ಕ್ಷೇತ್ರಗಳೆಂದರೆ ಸಿನಿಮಾ, ರಾಜಕಾರಣ ಮತ್ತು ಕ್ರಿಕೆಟ್. ಜನಪ್ರಿಯ ಸಿನಿಮಾಗಳು ಮತ್ತು ಕ್ರಿಕೆಟ್ ಉದ್ಯಮ ಇವೆರಡೂ ಉಂಟುಮಾಡುವ ಪ್ರಭಾವದ ಆವರಣದ ನಡುವೆಯೇ ರಾಜಕಾರಣ ತನ್ನನ್ನು ಪ್ರತಿಷ್ಠಾಪಿಸಿಕೊಳ್ಳುವ ತಂತ್ರಗಳನ್ನು ಹೆಣೆದುಕೊಳ್ಳುತ್ತದೆ. ಆ ತಂತ್ರಗಳು ಯಶಸ್ವಿಯಾಗಲೇಬೇಕು ಎಂಬ ಹಠದೊಂದಿಗೇ ಹೆಜ್ಜೆಯಿರಿಸುತ್ತದೆ. ಎದುರುಗೊಳ್ಳುವವರನ್ನು ಹಣಿಯುವ ನಿಗೂಢ ಕಾರ್ಯಸೂಚಿಗಳನ್ನು ಸಂದರ್ಭಕ್ಕೆ ಅನುಗುಣವಾಗಿ ರೂಪಿಸಿಕೊಂಡುಬಿಡುತ್ತದೆ. ಪರ್ಯಾಯ ನಾಯಕತ್ವದ ಉದಾತ್ತ ಅವಕಾಶಗಳನ್ನು ಹೊಸಕಿಹಾಕಿ ಜನರಿಂದ ಆಯ್ಕೆಯ ಐಚ್ಛಿಕತೆಯನ್ನೇ ಕಿತ್ತುಕೊಂಡುಬಿಡುತ್ತದೆ. ‘ಇವರಿಲ್ಲದಿದ್ದರೆ ಮತ್ತಿನ್ಯಾರು ಆಳುವವರು’ ಎಂಬ ಅವಲಂಬನಾ ದೃಷ್ಟಿಕೋನವನ್ನು ಅದೇ ಜನವಲಯದಲ್ಲಿಯೇ ನೆಲೆಗೊಳಿಸಿಬಿಡುತ್ತದೆ. ನಾಯಕರಲ್ಲದ ನಾಯಕರೆನ್ನಿಸಿಕೊಂಡವರನ್ನು ಆರಾಧಿಸುವವರ ಸಂಖ್ಯಾಬಾಹುಳ್ಯ ಹೆಚ್ಚಿಸಿಕೊಳ್ಳುತ್ತಲೇ ತನ್ನ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿರುತ್ತದೆ. ಆಗಲೇ ಜನರು ಮುಗ್ಧವಾಗಿ ನಂಬುತ್ತಲೇ ತಮ್ಮ ಯೋಚನೆಯ ಶಕ್ತಿಯನ್ನೇ ತ್ಯಜಿಸಿಬಿಡುತ್ತಾರೆ.
ತಾರ್ಕಿಕವೆನ್ನಿಸುವ ಪ್ರಜಾಸತ್ತಾತ್ಮಕ ವೈಚಾರಿಕ ಎಚ್ಚರದಲ್ಲಿ ರಾಜಕಾರಣವನ್ನು ಗ್ರಹಿಸುವ ಬದಲು ಹೊಗಳಿಕೆಗಳ ಅಭಿಪ್ರಾಯಗಳನ್ನು ಹೇಳಿಕೊಳ್ಳುವುದಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಳ್ಳುತ್ತಾರೆ.
ಉನ್ನತ ಹುದ್ದೆಯಲ್ಲಿರುವ ಇಬ್ಬರು ಸ್ನೇಹಿತರ ನಡುವೆ ರಾಜಕಾರಣದ ಬಗ್ಗೆ ಚರ್ಚೆ ಶುರುವಾಗುತ್ತದೆ. ಒಬ್ಬರು ಸರ್ಕಾರವನ್ನು ಆರಾಧಿಸಿ ಮಾತನಾಡಿದರೆ ಮತ್ತೊಬ್ಬರು ಪ್ರಶ್ನೆಗಳನ್ನೆತ್ತಿ ಪ್ರತಿರೋಧದ ಮಾತುಗಳನ್ನಾಡುತ್ತಾರೆ.ಪ್ರತಿರೋಧವನ್ನೊಡ್ಡಿದವರು ಯಾರೇ ಅಧಿಕಾರಕ್ಕೆ ಬರಲಿ, ಅವರನ್ನು ಪ್ರಶ್ನಿಸುವ ಹಕ್ಕನ್ನು ನಾವೆಲ್ಲರೂ ಉಳಿಸಿಕೊಳ್ಳಲೇಬೇಕು ಎಂಬ ಅನಿವಾರ್ಯತೆಯನ್ನು ಮನಗಾಣಿಸಲು ಪ್ರಯತ್ನಿಸುತ್ತಾರೆ. ಆದರೆ, ಸರ್ಕಾರದ ಬಗ್ಗೆ ಆರಾಧನಾ ಮನೋಭಾವವಿರುವ ಸ್ನೇಹಿತ ಮಾತನಾಡುತ್ತಾ ಆಡುತ್ತಾ ಭಾವುಕ ವ್ಯಗ್ರತೆಯನ್ನು ಪ್ರದರ್ಶಿಸಲಾರಂಭಿಸುತ್ತಾನೆ. ಪ್ರತಿರೋಧಧ ವಿಚಾರಗಳನ್ನು ಪ್ರಸ್ತಾಪಿಸಿದ ಮಿತ್ರನ ಸಂಯಮದ ಸಂವಾದಕ್ಕೆ ಪ್ರತಿಯಾಗಿ ವಿತಂಡವಾದ ಮುಂದಿಡಲಾರಂಭಿಸುತ್ತಾನೆ. ತಾರ್ಕಿಕ ಪ್ರಶ್ನೆಗಳಿಗೆ ಉತ್ತರಿಸಲಾಗದೇ ವ್ಯಕ್ತಿಗತ ಆರೋಪಗಳನ್ನು ಹೊರಿಸುವ ತಂತ್ರ ಅನುಸರಿಸುತ್ತಾನೆ. ಆ ಮೂಲಕ ತಾರ್ಕಿಕ ವೈಚಾರಿಕತೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಾನೆ. ಆ ಹೊತ್ತಿಗೆ ಇಬ್ಬರ ನಡುವೆ ಸೃಷ್ಟಿಯಾದ ಭಿನ್ನಾಭಿಪ್ರಾಯ ದ್ವೇಷಕ್ಕೆ ತಿರುಗುತ್ತದೆ. ಆ ದ್ವೇಷವು ಮುಂದುವರೆದು ಸ್ನೇಹ ಕೊನೆಗೊಳ್ಳುತ್ತದೆ. ರಾಜಕೀಯ ಪಕ್ಷಗಳು ತಮ್ಮೊಳಗಿನ ಅಧಿಕಾರದ ಹಸಿವನ್ನು ನೀಗಿಸಿಕೊಳ್ಳಲು ಇಂಥದ್ದೇ ಆದ ಮನೋವೈಕಲ್ಯವನ್ನು ನಿರೀಕ್ಷಿಸುತ್ತವೆ. ಇದನ್ನು ಸಾಮೂಹಿಕ ಗುಣಲಕ್ಷಣವಾಗಿಸಿ ತಮ್ಮ ಅಧಿಕಾರದ ಫಸಲು ತೆಗೆಯುವ ಉದ್ದೇಶ ಈಡೇರಿಸಿಕೊಳ್ಳುತ್ತವೆ. ನಿಜವಾದ ರಾಜಕೀಯ ಪ್ರಜ್ಞೆಯನ್ನು ಕೊಲೆಗೈದು ತಮ್ಮನ್ನು ವಿಜೃಂಭಿಸಿಕೊಳ್ಳುತ್ತವೆ.
ಪ್ರಸಕ್ತ ರಾಜಕೀಯ ವ್ಯವಸ್ಥೆಯ ಎಲ್ಲ ಮಿತಿಗಳನ್ನು ರಂಜನೀಯ ನೆಲೆಯಲ್ಲಿ ಸ್ವೀಕರಿಸುವ ವಿಚಿತ್ರವಾದ ಸಮೂಹಕೇಂದ್ರಿತ ಊನ ( Mass Syndrome)ಈಗಾಗಲೇ ವ್ಯಾಪಕವಾಗಿಬಿಟ್ಟಿದೆ. ನಮ್ಮಲ್ಲಿ ಅಧಿಕಾರ ರಾಜಕಾರಣದ ಕುರಿತಾದ ಚರ್ಚೆಗಳು ಇದರ ಸಂಕುಚಿತ ಜಾಲದ ಪರಿಧಿಯನ್ನು ದಾಟಿಕೊಳ್ಳುವುದೇ ಇಲ್ಲ. ಹಾಗೆ ದಾಟಿಕೊಳ್ಳದ ಹಾಗೆ ವಿತಂಡವಾದಿ ದೃಷ್ಟಿಕೋನಗಳು ಕಡಿವಾಣ ಬಿಗಿದುಬಿಡುತ್ತವೆ. ರಾಜಕಾರಣದೊಳಗಿನ ಊನಗಳೊಂದಿಗಿನ ಸಾಂಪ್ರದಾಯಿಕತೆಯನ್ನೇ ಮೌಲ್ಯವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ಬೇರೂರಿಸಿಬಿಡುತ್ತವೆ. ದೇಶವೊಂದರೊಳಗೆ ಸಾಮಾಜಿಕ ವ್ಯವಸ್ಥೆಯೊಂದಿರುತ್ತದೆ. ಆಡಳಿತಾರೂಢ ಸರ್ಕಾರವು ಜಪಿಸುವ ಅಭಿವೃದ್ಧಿಯ ಮಂತ್ರದೊಂದಿಗೆ ತಳುಕು ಹಾಕಿಕೊಂಡ ಆರ್ಥಿಕತೆಯು ಈ ಸಾಮಾಜಿಕ ವ್ಯವಸ್ಥೆಯ ರೂಪು-ರೇಷೆಗಳಿಗೆ ಅನುಗುಣವಾಗಿರಬೇಕು ಎಂಬ ಕನಿಷ್ಠ ಪ್ರಜ್ಞೆಯನ್ನು ಆಧರಿಸಿಯೇ ಇರುವುದಿಲ್ಲ. ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಹೆಚ್ಚಿಸುವಂತೆಯೇ ಆ ಆರ್ಥಿಕ ವ್ಯವಸ್ಥೆ ಬಲಿಷ್ಠವಾಗುತ್ತ ಸಾಗುತ್ತದೆ.
ಉಳ್ಳವರ ಪರವಾದ ಅರ್ಥವ್ಯವಸ್ಥೆಯ ಪ್ರಾಬಲ್ಯವನ್ನು ಮತ್ತಷ್ಟು ಹೆಚ್ಚಿಸುವುದರ ಕಡೆಗೆ ರಾಜಕಾರಣ ತನ್ನ ಗಮನವನ್ನು ಕೇಂದ್ರೀಕರಿಸುತ್ತದೆ. ಇಲ್ಲಿ ವ್ಯಕ್ತಿಗತ ಮಾನವ ಸಂಪನ್ಮೂಲದ ಸಮಗ್ರ ಅನ್ವಯಿಸುವಿಕೆಯ ಪರಿಕಲ್ಪನೆಗಳಿಗೆ ಆದ್ಯತೆ ಇರುವುದೇ ಇಲ್ಲ. ಸಾಮಾಜಿಕ ವ್ಯವಸ್ಥೆಯೊಳಗಿನ ಧಾರ್ಮಿಕತೆ ಮತ್ತು ಅದಕ್ಕನುಗುಣವಾಗಿಯೇ ಬೇರೂರಿಬಿಟ್ಟಿರುವ ಜಾತಿ-ಪಂಗಡಗಳ ಸಂಕೀರ್ಣ ಆವೃತ್ತಿಗಳು ಸಾಮಾಜಿಕ ಉದ್ಯಮಗಳಾಗಿಯೇ ಬೆಳೆಯುತ್ತಿರುತ್ತವೆ. ಅವುಗಳ ಸಮಾಜೋ-ಧಾರ್ಮಿಕ ಔದ್ಯಮಿಕತೆಯು ಮಠೀಯತೆ, ಮಠಾಧೀಶ ಮುಂದಾಳತ್ವ, ನಮ್ಮ ಜಾತಿಯವರಿಷ್ಟಿದ್ದೇವೆ ಎಂದು ತೋರಿಸಿಕೊಳ್ಳುವ ಬೃಹತ್ ಸಮಾವೇಶಗಳು, ಅವುಗಳಲ್ಲಿ ಭಾಗವಹಿಸಿ ತಮ್ಮ ಟೊಳ್ಳು ಮುಖಂಡತ್ವವನ್ನು ಮತ್ತೊಮ್ಮೆ ನವೀಕರಿಸಿಕೊಳ್ಳುವವರ ಉತ್ಸಾಹ ಮತ್ತು ಅಧಿಕಾರದಲ್ಲಿರಲಿ, ಇಲ್ಲದೇ ಇರಲಿ ಸದಾ ನಿಮ್ಮ ಬೆಂಬಲಕ್ಕಿದ್ದೇವೆ ಎಂದು ಘೋಷಿಸುವ ಜನಪ್ರಿಯ ವಾಂಛೆಗಳ ಮೂಲಕ ದೃಢಪಡುತ್ತದೆ. ಆ ಮೂಲಕ ಧಾರ್ಮಿಕ ಜಡತ್ವ ಮತ್ತು ಜಾತಿ ವ್ಯವಸ್ಥೆ ಮತ್ತಷ್ಟು ನಿಚ್ಛಳವಾಗುತ್ತದೆ. ದಾರ್ಶನಿಕರ ವೈಚಾರಿಕ ಆಂದೋಲನಗಳು ಹರಡಿದ ಮನುಷ್ಯತ್ವದ ಪ್ರಭೆಯನ್ನು ತಡೆದು ವಿಚಿತ್ರ ಹಠದೊಂದಿಗೆ ರಾಜಕಾರಣವು ಕತ್ತಲನ್ನೇ ಶಾಶ್ವತವಾಗಿ ಪಸರಿಸಿಬಿಡುತ್ತದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ನಡೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಈ ಅಂಶ ಸ್ಪಷ್ಟವಾಗಿಬಿಡುತ್ತದೆ. ಆದರೆ ಹೀಗೆ ಸ್ಪಷ್ಟಪಡಿಸಿಕೊಳ್ಳುವ ಸಾಮೂಹಿಕ ಸಂಯಮ ಈಗ ಕಾಣೆಯಾಗಿದೆ.
ಆ ಸಾಮೂಹಿಕ ಸಂಯಮವಿಲ್ಲದಿದ್ದರೆ ಪ್ರಜೆಗಳೆನ್ನಿಸಿಕೊಂಡವರು ಬೆಲೆ ತೆರಲೇಬೇಕಾಗುತ್ತದೆ. ಸಮಸ್ಯೆಗಳನ್ನು ಸಹಿಸಿಕೊಳ್ಳುವುದಷ್ಟೇ ಅಲ್ಲದೇ ಅವುಗಳ ವರ್ತುಲದೊಳಗೆ ಸಿಲುಕಿಕೊಳ್ಳುವ ಅನಿವಾರ್ಯತೆಯ ಅಸಹಾಯಕತೆಯನ್ನೇ ಸಹಜಗುಣವಾಗಿಸಿಕೊಳ್ಳುವ ಉಮೇದಿನೊಂದಿಗೆ ಗುರುತಿಸಿಕೊಳ್ಳುವ ಒತ್ತಡವೂ ಸೃಷ್ಟಿಯಾಗುತ್ತದೆ. ಈ ಅಸಹಾಯಕತೆ ಎಷ್ಟು ಅಂತಸ್ಥವಾಗುತ್ತದೆ ಎಂದರೆ ಹೊಸದಾದ ಯಾವ ಚಿಂತನೆಯೂ ಒಪ್ಪಿತವೆನ್ನಿಸುವುದಿಲ್ಲ. ದೇಶೋದ್ಧಾರದ ಸಮಗ್ರ ಹೊಣೆಗಾರಿಕೆ ನಿಭಾಯಿಸಬೇಕಾದ ರಾಜಕೀಯ ಪಕ್ಷಗಳು ಜನರನ್ನು ಮತ್ತೆ ಅಸಹಾಯಕತೆಯ ಸಂಕುಚಿತ ಬಾವಿಯೊಳಗೆ ಬಂಧಿಸಿಡುವ ನಡೆಗಳೊಂದಿಗೆ ಇದ್ದುಬಿಡುವುದರ ಕಡೆಗೇ ಒಲವು ತೋರುತ್ತವೆ. ಈ ಕುರಿತ ಸುಳಿವುಗಳನ್ನು ಪಕ್ಷಗಳ ಮುಖಂಡರ ಹೇಳಿಕೆಗಳು, ಪ್ರತಿಹೇಳಿಕೆಗಳು, ಚುನಾವಣಾ ರಣತಂತ್ರಗಳನ್ನು ಸೂಕ್ಷ್ಮವಾಗಿ ಗಮನಿಸುವ ಮೂಲಕ ಗೊತ್ತುಮಾಡಿಕೊಳ್ಳಬಹುದು.
ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಡಳಿತಾರೂಢ ಪಕ್ಷ ತಂತ್ರ ಹೆಣೆಯುವುದರ ಕಡೆಗೆ ಆದ್ಯತೆ ನೀಡುತ್ತಿರುವ ವಿವರಗಳು ಗಮನಕ್ಕೆ ಬರುತ್ತಲೇ ಇವೆ. ರಾಷ್ಟ್ರಾದ್ಯಂತ ಪ್ರತಿರೋಧದ ಅಲೆಯನ್ನು ಎಬ್ಬಿಸಬೇಕು ಎಂಬ ಉದ್ದೇಶದೊಂದಿಗೆ ಅಖಾಡಕ್ಕಿಳಿದಿರುವ ವಿರೋಧ ಪಕ್ಷ ಅಸ್ಪಷ್ಟ, ದ್ವಂದ್ವ ನಿಲುವುಗಳೊಂದಿಗೇ ಹೆಜ್ಜೆಯಿರಿಸುತ್ತಿರುವ ಸಂಗತಿಯೂ ಗೊತ್ತಾಗುತ್ತಿದೆ. ವಿರೋಧ ಪಕ್ಷದ ಯುವನೇತಾರನಿಗೆ ಸಂಬಂಧಿಸಿದಂತಹ ವಾಟ್ಸ್ಯಾಪ್ ವೀಡಿಯೋವೊಂದು ಹಲವರಿಗೆ ರಂಜನೆ ನೀಡುತ್ತಿದೆ. ಆ ನೇತಾರನ ಬಿಂಬವು ರೈತನೊಬ್ಬನೊಂದಿಗೆ ಸಂಭಾಷಿಸುತ್ತದೆ. ಗದ್ದೆಯಲ್ಲೆಲ್ಲ ಕೆಸರು ಎಂಬ ರೈತನುಡಿಗೆ ಪ್ರತಿಯಾಗಿ ಆ ನೇತಾರಬಿಂಬವು ‘ನಾವು ಅಧಿಕಾರಕ್ಕೆ ಬಂದರೆ ಗದ್ದೆಯಲ್ಲಿ ಟೈಲ್ಸ್ ಹಾಕಿಸುತ್ತೇವೆ’ ಎನ್ನುತ್ತದೆ. ತಮಾಷೆಯೆನ್ನಿಸಿ ಆ ಕ್ಷಣಕ್ಕೆ ಖುಷಿ ಪಡಬಹುದಾದ ಈ ತರಹದ ವಿಡಿಯೋಗಳ ವೀಕ್ಷಿಸುವಿಕೆ ಮತ್ತು ಇನ್ನೊಬ್ಬರಿಗೆ ರವಾನಿಸುವಿಕೆಯ ಕಾರ್ಯಗಳಲ್ಲಿಯೇ ಜನರು ನಿರತರಾಗಿದ್ದಾರೆ. ಸೂಕ್ಷ್ಮವಾಗಿ ಗಮನಿಸಿದರೆ ಅಧಿಕಾರದಲ್ಲಿರುವವರು ಮತ್ತು ಅಧಿಕಾರದಲ್ಲಿರದೇ ಇರುವವರು ಪರಸ್ಪರರನ್ನು ಹೀಗೆ ರಂಜನೀಯವಾಗಿ ಕಾಲೆಳೆಯುತ್ತಾ ಜನರಿಗೆ ಖುಷಿ ನೀಡುತ್ತಾ ಈ ದೇಶದ ಬೆಳವಣಿಗೆಗೆ ಅಗತ್ಯವಾಗಿ ಆಗಬೇಕಾಗಿರುವುದು ಏನು ಎಂಬುದರ ಕುರಿತಾದ ತಾತ್ವಿಕ ಚರ್ಚೆಗಳ ಸಾಧ್ಯತೆಯನ್ನು ಉದ್ದೇಶಪೂರ್ವಕವಾಗಿ ತಡೆದುಬಿಡುತ್ತಿದ್ದಾರೆ. ಹೊಸ ಮಾಧ್ಯಮಗಳ ಪ್ರಭಾವ ಅವರ ಈ ಉದ್ದೇಶವನ್ನು ಈಡೇರಿಸಿಬಿಡುತ್ತಿದೆ. ಈ ಹಂತದಲ್ಲಿಯೇ ‘ನೀವ್ಯಾರ ಪರ’ ಎಂಬ ಪ್ರಶ್ನೆ ತಾರ್ಕಿಕತೆಯನ್ನು ಮುನ್ನೆಲೆಗೆ ತರುವ ಬದಲು ಆರಾಧನಾರೂಪದ ನಿಷ್ಠೆಯನ್ನು ನಿರೀಕ್ಷಿಸುತ್ತಿದೆ. ಆಡಳಿತಾರೂಢರ ಪರ ಎಂದರೆ ಸೇಫ್. ಇಲ್ಲದಿದ್ದರೆ ಗುಮಾನಿಗಳೇಳುತ್ತವೆ. ಮುಕ್ತವಾಗಿ ಸಮಸ್ಯೆ ಹೇಳಿಕೊಂಡಾಗಲೂ ಇಂಥವೇ ಗುಮಾನಿಗಳ ದಾಳಿಗೊಳಗಾಗುವ ಅಸಹಾಯಕತೆಗೆ ಪಕ್ಕಾಗಬೇಕಾಗುತ್ತದೆ. ಸಂವಿಧಾನದೊಳಗಿನ ಅಕ್ಷರಗಳು ಮತ್ತು ಅವುಗಳು ದಾಟಿಸುವ ಉದಾತ್ತ ಆಶಯಗಳು ಉಸಿರುಗಟ್ಟಿಸಿಕೊಳ್ಳುತ್ತವೆ. ಶಾಲಾ-ಕಾಲೇಜು ಹಂತಗಳಲ್ಲಿನ ಅಭಿಮಾನಿ ಮನೋಧರ್ಮ ದೊಡ್ಡವರಾದಾಗಲೂ ಉಳಿದುಕೊಂಡು ದೇಶವನ್ನೂ ಮತ್ತೆ ಮತ್ತೆ ಉಸಿರುಗಟ್ಟಿಸುತ್ತಿರುತ್ತದೆ.
(ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ
ಉಜಿರೆ
ಇ-ಮೇಲ್ ವಿಳಾಸ:
nkpadmanabh@gmail.com)

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಶುಕ್ರವಾರದಂದು ಕನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛ ಸಂಕೀರ್ಣ ಘಟಕ, ಕೂಸಿನ ಮನೆ ಹಾಗೂ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ 39 ಕಸ ವಿಲೇವಾರಿ ಘಟಕಗಳ ಪೈಕಿ, ಕನಗೊಂಡನಹಳ್ಳಿಯಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ನೂತನ ಘಟಕ ನಿರ್ಮಿಸಲಾಗಿದೆ. ಇದರ ನಿರ್ವಹಣೆಗಾಗಿ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಸಾರ್ವಜನಿಕರು ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಗ್ರಾಮಸ್ಥರೇ ಘಟಕಗಳನ್ನು ನಿರ್ವಹಿಸಿದರೆ ಗ್ರಾಮದ ಆರ್ಥಿಕತೆಗೆ ಬಲ ಬರುತ್ತದೆ. ಇದರ ಜೊತೆಗೆ ಚರಂಡಿ ಸ್ವಚ್ಛತೆಯಲ್ಲೂ ಗ್ರಾಮಸ್ಥರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ತಕ್ಷಣವೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತರ ಉದ್ಘಾಟನೆಗಳು
ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂಸದರು ಹೊಸಕೊಳೇನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ‘ಕೂಸಿನ ಮನೆ’ ಮತ್ತು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ತದನಂತರ ಹಳೆಕೊಳೇನಹಳ್ಳಿಯಲ್ಲಿ ಮೂರು ಹೊಸ ಶಾಲಾ ಕೊಠಡಿಗಳು ಹಾಗೂ ಅಡುಗೆ ಕೊಠಡಿಯನ್ನು ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿತ್ತೆ ಮಾಧವ ವಿಠಲರಾವ್, ತಾಲ್ಲೂಕು ಪಂಚಾಯಿತಿ ಇಓ ರಾಮ್ ಭೋವಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ
ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಪ್ರಾಂಶುಪಾಲರು, ಮೇಲ್ವಿಚಾರಕರು, ವೀಕ್ಷಕರೊಂದಿಗೆ ಚರ್ಚಿಸಲು ಆಯೋಜಿಸಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು .ಮತ್ತು ಪರೀಕ್ಷಾ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.
ಎಲ್ಲಾ ಕೇಂದ್ರಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಪರೀಕ್ಷೆಗೆ 45 ನಿಮಿಷ ಮುಂಚಿತವಾಗಿ ಬಂದು ಪರೀಕ್ಷಾ ಕೊಠಡಿಯಲ್ಲಿ ವರದಿ ಸಿದ್ದಪಡಿಸಿಕೊಳ್ಳಬೇಕು. ಹಾಗೂ ಪರೀಕ್ಷೆ ನಡೆಯುವ ಕೊಠಡಿಯ ಒಳಗೆ ವಾಚ್, ಕ್ಯಾಲುಕಿಲೇಟರ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಬರುವಂತಿಲ್ಲ್ಲ. ಪರೀಕ್ಷೆ ಮುಗಿದ ನಂತರ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್ಲೈನ್ನಲ್ಲಿ ಅಪ್ಡೇಟ್ ಮಾಡಿಸಬೇಕು. ಕೊಠಡಿಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡಿಸಬೇಕು ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಳನಿವಿಲೋ ದೊರೆಸ್ವಾಮಿ ಮಾತನಾಡಿ, ಜ.25 ರಂದು ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರದ 18 ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಎಲ್ಲಾ ಕೇಂದ್ರಗಳಿಗೂ ಮೇಲ್ವಿಚಾರಕರು, ಮತ್ತು ವೀಕ್ಷಕರನ್ನು ನೇಮಿಸಲಾಗಿದೆ.
ಬೆಳಿಗ್ಗೆ 10.30 ರಿಂದ 12.30 ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2.30 ರಿಂದ 4.30 ರವೆರೆಗೆ ಪತ್ರಿಕೆ-2 ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಎಲ್ಲ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರನ್ನೆ ಸಂಪರ್ಕಿಸಿ, ಪ್ರತಿ 24 ಅಭ್ಯರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರಂತೆ ಅವಶ್ಯವಿರುವಷ್ಟು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮೂಲಕ ಪಡೆಯುವ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಜಾಮರ್ (Jamar) ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ನೀಡಲಾಗಿದ್ದು, ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಪ್ರತಿ ಕೇಂದ್ರಕ್ಕೆ ಅಗತ್ಯವಿರುವಷ್ಟು ಹೋಮ್ಗಾರ್ಡ್ಗಳನ್ನು ನಿಯೋಜಿಸಬೇಕು. ತಪಾಸಣೆ ಮಾಡುವ ಸಿಬ್ಬಂದಿಗಳಿಗೆ ಸಹಾಯವಾಗುವಂತೆ ಪ್ರತಿ ಕೇಂದ್ರಕ್ಕೆ ಎರಡು ಹ್ಯಾಂಡ್ ಮೆಟಲ್ ಡಿಟೆಕ್ಟರ್ಗಳನ್ನು ಒದಗಿಸಲಾಗುವುದು.
ಕಾಲೇಜಿನ ಪ್ರಾಂಶುಪಾಲರನ್ನು ಆಯಾ ಕಾಲೇಜಿಗೆ ಮೇಲ್ವಿಚಾರಕರನ್ನಾಗಿ ನೇಮಿಸಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾಣುವಂತೆ ಪರೀಕ್ಷಾ ವೇಳಾಪಟ್ಟಿಯನ್ನು ಅಲ್ಲಲ್ಲಿ ಅಳವಡಿಸಿರಬೇಕು. ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಮತ್ತು ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಪೊಲೀಸರ ಸಹಾಯದಿಂದ ಮುಚ್ಚಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ 18 ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ2 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ


