Connect with us

ರಾಜಕೀಯ

99% ಭಾರತೀಯರು V/S 1% ಕೋಮುವಾದಿಗಳು

Published

on

  • 8.1.2020ರಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟವು ಬೆಂಗಳೂರಿನಲ್ಲಿ ಕೇಂದ್ರದ ಜನವಿರೋಧಿ ಪೌರತ್ವ ಕಾಯ್ದೆ[CAA, NRC, NPR] ಕುರಿತು ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಚಾರಸಂಕಿರಣದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ ಇಲ್ಲಿದೆ.

–ದೇವನೂರ ಮಹಾದೇವ

ಭಾರತ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲ, ಸಂವಿಧಾನದ ಮೌಲ್ಯಗಳಿಗೆ ಧಕ್ಕೆ ಬಂದಾಗಲೆಲ್ಲ, ಭಾರತ ತನ್ನ ಅಂತಃಸತ್ವದ ಭವ್ಯತೆಯನ್ನು ಬೆಳಗುತ್ತದೆ ಎಂದು ಕಾಣುತ್ತದೆ. ಆ ಬೆಳಗುವಿಕೆ ಇಂದು ನಿಚ್ಚಳವಾಗಿ ಕಾಣುತ್ತಿದೆ. ಹೃದಯ, ಮಿದುಳು, ಹೊಟ್ಟೆ ತುಂಬ ಗಣಿ ಲೂಟಿ ದುಡ್ಡನ್ನೆ ತುಂಬಿಕೊಂಡ ಮದದ ಸೋಮಶೇಖರರೆಡ್ಡಿ ಎಂಬ ಬಿಜೆಪಿ ಶಾಸಕ ಸಿಎಎ ಮತ್ತು ಎನ್‍ಆರ್‍ಸಿ ವಿರೋಧಿಸುವವರಿಗೆ ‘ನೀವು 20% ಇದ್ದೀರಿ, ನಾವು 80% ಇದ್ದೇವೆ.

ಜೋಕೆ’ ಎಂದು ಹೇಳಿದ್ದಕ್ಕೆ ಭವ್ಯ ಎಂಬ ತರುಣಿ ಹೇಳುವುದು ಹೀಗೆ- “ರೆಡ್ಡಿ, ನೆನಪಿರಲಿ, ಸಿಎಎ ಮತ್ತು ಎನ್‍ಆರ್‍ಸಿ ವಿರೋಧಿಸುವ ನಾವು ಭಾರತೀಯರು 99% ಇದ್ದೇವೆ. ನೀವು ಕೋಮುವಾದಿಗಳು 1% ಇದ್ದಿರಿ” ಈ ಮಾತಲ್ಲಿ ಭಾರತದ ಭವ್ಯತೆ ಪ್ರಕಾಶಗೊಳ್ಳುತ್ತದೆ. ಇಂದು ಸಂಘರ್ಷ ನಡೆಯುತ್ತಿರುವುದು 99% We the people of India V/s 1% ಕೋಮುವಾದಿ ಗ್ಯಾಂಗ್ ನಡುವೆ.

ಹೀಗೆ ಭವ್ಯ ಥರಾನೇ ಉನ್ನತ ಅಧಿಕಾರಿಗಳಾಗಿದ್ದ ಸಸಿಕಾಂತ್ ಸೆಂಥಿಲ್ ಹಾಗೂ ಕಣ್ಣನ್ ಗೋಪಿನಾಥ್ ನಡೆನುಡಿ ನೋಡಿದಾಗಲೂ ಭಾರತಕ್ಕೆ ಭವಿಷ್ಯವಿದೆ ಅನ್ನಿಸುತ್ತದೆ. ಎಲ್ಲಕ್ಕಿಂತ ಸಂವಿಧಾನದ ಮೌಲ್ಯಕ್ಕೆ ಬಿಲ ತೋಡಿ ತಿಂದು ಹಾಕುತ್ತಿದ್ದ ಇಲಿ ಹೆಗ್ಗಣಗಳ ವಿರುದ್ಧವಾಗಿ ವಿದ್ಯಾರ್ಥಿ ಯುವಜನರ ಸ್ಫೋಟ ಕಂಡಾಗ ಈ ವಿದ್ಯಾರ್ಥಿ ಯುವಜನರ ನಾಯಕತ್ವಕ್ಕೆ ಭಾರತವನ್ನು ಕಾಪಾಡುವ ಶಕ್ತಿ ಇದೆ ಎಂದು ಅನ್ನಿಸುತ್ತದೆ.

ಇಂದು ದೇಶದ ತುಂಬಾ ಸಿಎಎ, ಎನ್‍ಆರ್‍ಸಿ ಎನ್‍ಪಿಆರ್ ಬಗ್ಗೆ ಭೀತಿ ತುಂಬಿದೆ. ಎಷ್ಟೆಂದರೆ ಇತ್ತೀಚೆಗೆ ಚಾಮರಾಜನಗರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಆರೋಗ್ಯ ಮಾಹಿತಿಗಳನ್ನು ಸಂಗ್ರಹಿಸಲು ಬಂದಾಗ ಅಲ್ಲಿನ ಜನರು ಆ ಗಣತಿಯು ಸಿಎಎ, ಎನ್‍ಆರ್‍ಸಿ, ಎನ್‍ಪಿಆರ್ ಬಲೆ ಇರಬೇಕೆಂದು ಭಾವಿಸಿ ಆ ಗಣತಿ ಫಾರಂಗಳನ್ನು ಹರಿದೆಸೆದು ಹಿಂದಕ್ಕೆ ಕಳಿಸಿದ್ದಾರೆ. ಅಷ್ಟೊಂದು ಭೀತಿ ಹರಡಿದೆ.

ಈಗ, ನನ್ನ ಹುಟ್ಟಿದ ದಿನಾಂಕ ಕೇಳಿದರೆ ನನ್ನ ಅವ್ವ ಹೇಳಿದಂತೆ-ಅದು ಸೋಮವಾರ ಸಂಜೆ ರೈಲು ಕವಲಂದೆ ಸ್ಟೇಷನ್‍ನಲ್ಲಿ ನಿಂತು ಹೊರಡುವ ಸಮಯವಂತೆ. ಹೀಗಿರುವಾಗ ದಿನಾಂಕ ಹೇಗೆ ಹೇಳಲಿ? ನನ್ನ ಮೊಮ್ಮಗಳಿಗೆ ನನಗೆ ಬರ್ತ್‍ಡೇ ಇಲ್ಲ ಎಂದು ತಿಳಿದು ಅವಳು ಬೇಜಾರು ಮಾಡಿಕೊಂಡು ‘ನನ್ನ ಹುಟ್ಟಿದ ದಿನವೇ ನಿನ್ನ ಹುಟ್ಟಿದ ದಿನ’ ಎಂದು ನನಗೆ ಸಮಾಧಾನ ಮಾಡಿದ್ದಾಳೆ! ನನಗೇ ಹೀಗಿರುವಾಗ, ಇನ್ನು ನಮ್ಮ ಅಪ್ಪನ ಹುಟ್ಟಿದ ದಿನಾಂಕ ಕೇಳಿದರೆ ಏನು ಹೇಳಲಿ? ಇರುವುದನ್ನು ಹೇಳಿದರೆ ನಾನು ಅನುಮಾನಾಸ್ಪದ [Doughtful] ವ್ಯಕ್ತಿಯಾಗುತ್ತೇನೆ.

ಏನು ಹೇಳಲಿ? ಮೋದಿಯವರ ಅಪ್ಪ ಹುಟ್ಟುವ ಐದು ವರ್ಷಕ್ಕೆ ಮೊದಲು ಎನ್ನಲೆ? ಅಥವಾ ಅಮಿತ್‍ಷಾರ ಅಪ್ಪ ಹುಟ್ಟುವ 20 ವರ್ಷಕ್ಕೆ ಮೊದಲು ಎನ್ನಲೆ? ಬಹುಶಃ ನನ್ನ ಮೂಲ ಇರುವುದು ಹರಪ್ಪ-ಮಹೆಂಜೋದಾರೋದಲ್ಲಿ. ಅದು ಇಂದು ಪಾಕಿಸ್ತಾನದಲ್ಲಿದೆ ಏನು ಮಾಡಲಿ? ಈಗ ಮೊದಲು ಎನ್‍ಪಿಆರ್ ಬಲೆ ಹಾಕುತ್ತಾರೆ. ಇದರ ಆಧಾರದ ಮೇಲೆ ಎನ್‍ಆರ್‍ಸಿ ಆವರಿಸಿ ಅನುಮಾನಾಸ್ಪದ [Doughtful] ಮಾಡುತ್ತಾರೆ. ಆಮೇಲೆ ಈ ಅನುಮಾನಾಸ್ಪದ ‘ಡಿ’ ಗೆ ಸಿಎಎ[ಕಾ] ಯಮಪಾಶ ಹಾಕುತ್ತಾರೆ. ಇದನ್ನೇ ಐತಿಹಾಸಿಕ ಎನ್ನುತ್ತಿದ್ದಾರೆ.

ಇಂತಹವುಗಳನ್ನೆಲ್ಲಾ ಮಾಡಲು ಹೊರಟವರು ಹೇಗೆ ಮಣ್ಣು ಮುಕ್ಕಿದರು ಎಂದು ನಾವು ಅಕ್ಕಪಕ್ಕ ನೋಡಿಯಾದರೂ ಕಲಿಯಬೇಕಾಗಿದೆ. ಪತ್ರಕರ್ತ ಕೆ.ಎಸ್.ದಕ್ಷಿಣಾಮೂರ್ತಿಯವರು ತಮ್ಮ ಲೇಖನವೊಂದರಲ್ಲಿ ಹೇಗೆ ಕೆಲವು ದೇಶಗಳು ತಂತಮ್ಮ ದೇಶದ ರಾಜಧರ್ಮ ಹಾಗೂ ಸಂವಿಧಾನದಲ್ಲಿ ಹಸ್ತಕ್ಷೇಪ ಮಾಡಲು ಹೋಗಿ ಏನೆಲ್ಲಾ ದುರಂತಕ್ಕೆ ತುತ್ತಾದವು ಎಂಬುದನ್ನು ವಿವರಿಸುತ್ತಾರೆ.

1956ರಲ್ಲಿ ಶ್ರೀಲಂಕಾ ‘ಸಿಂಹಳದವರಿಗೆ ಮಾತ್ರ’ ಎಂದು ಮಾಡಲು ಹೋಗಿ ಎಲ್‍ಟಿಟಿಇ ಹುಟ್ಟಿಗೆ ಕಾರಣವಾಯ್ತು. ಧ್ವಂಸ, ಹಿಂಸೆ, ಸಾವು, ನೋವು ರಾಜೀವ್‍ಗಾಂಧಿಯವರನ್ನು ಬಲಿ ತೆಗೆದುಕೊಂಡಿತು. ರುವಾಂಡಾದಲ್ಲಿ ಅಲ್ಪಸಂಖ್ಯಾತ ಟುಟ್ಸಿ ಮತ್ತು ಬಹುಸಂಖ್ಯಾತ ಹುಟುಗಳ ಮಧ್ಯೆ ಸರ್ಕಾರವೇ ಬತ್ತಿ ಇಟ್ಟಿತು. ಐ.ಡಿ ಕಾರ್ಡ್ ಕಡ್ಡಾಯ ಮಾಡುತ್ತದೆ. ಕೇವಲ ನೂರು ದಿನಗಳಲ್ಲಿ 8 ಲಕ್ಷ ಜನ ಹತರಾಗುತ್ತಾರೆ.

ಸಾಯುವಾಗ ಒಂದೇ ಗುಂಪಿನವರು ಸಾಯುವುದಿಲ್ಲ. ಅಮಾಯಕರು ಹೆಚ್ಚು ಸಾಯುತ್ತಾರೆ. ಇದನ್ನೀಗ ಭಾರತ ಸರ್ಕಾರ ಮಾಡಲು ಹೊರಟಿದೆ. ಪಾಕಿಸ್ಥಾನದಲ್ಲಿ ಕೂಡ ಉರ್ದು ಭಾಷೆ ಮತ್ತು ಲಿಪಿಯನ್ನು ಬೆಂಗಾಲಿ ಮುಸ್ಲಿಮರ ಮೇಲೆ ಹೇರಲು ಹೋಗಿ ಇಡೀ ರಾಷ್ಟ್ರವೇ ಹೋಳಾಯ್ತು.

ಯುಗೊಸ್ಲಾವಿಯದಲ್ಲಿ ಎಂದೋ ಮುಚ್ಚಿಹೋಗಿದ್ದ ಜನಾಂಗೀಯ/ ಧಾರ್ಮಿಕ ಬಿರುಕನ್ನು ಮತ್ತೆ ಕೆದಕಲು ಹೋಗಿ ಕ್ರಿಶ್ಚಿಯನ್‍ರ ವಿರುದ್ಧ ಮುಸ್ಲಿಮರು, ಸರ್ಬರ ವಿರುದ್ಧ ಬೊಸ್ನಿಯನ್ನರು, ಕ್ರೊವೇಷಿಯನ್ನರ ವಿರುದ್ಧ ಸರ್ಬರು ಪರಸ್ಪರ ಶತ್ರುಗಳಾಗಿ ಈಗಲೂ ಅಲ್ಲಿ ಹಿಂಸೆ ತಾಂಡವವಾಡುತ್ತಿದೆ.

ಈ ರೀತಿಯಾಗುವುದು ಭಾರತಕ್ಕೆ ಬೇಕಾಗಿದೆಯೆ? ಸರ್ಕಾರಕ್ಕೇ ತನ್ನ ವಿಫಲತೆ ಮುಚ್ಚಿಕೊಳ್ಳಲು ಬೇಕಾಗಿರಬಹುದು. ಜನರು ಪೌರತ್ವ ರುಜುವಾತು ಪಡಿಸಲು ಅಲೆಯುತ್ತಿರಲಿ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತಕ್ಕೆ ತಲೆ ಕೆಡಿಸಿಕೊಳ್ಳದಿರಲಿ ಎಂದು ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿದೆ ಎಂದು ಕಾಣುತ್ತದೆ.

ನನ್ನ ಪೌರತ್ವದ ಬಗ್ಗೆ ಅನುಮಾನವಿರಬಹುದು ಆದರೆ ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿರುವುದರಲ್ಲಿ ಅನುಮಾನವೇ ಇಲ್ಲ. ಇದೆಲ್ಲಾ ಜನಸಮುದಾಯಕ್ಕೆ ಬೇಕಾಗಿದೆಯೆ? ಇದನ್ನೆಲ್ಲಾ ಪ್ರಶ್ನಿಸಬೇಕಾದ ಸಂಸತ್‍ನಲ್ಲಿ ಅಪರಾಧಿಗಳು, ಕೋಟ್ಯಾಧಿಪತಿಗಳು ಹೆಚ್ಚಾಗಿದ್ದು ಸಂಸತ್‍ನಿಂದ ಏನನ್ನೂ ನಿರೀಕ್ಷಿಸಲಾಗದು ಎನ್ನುವಂತಾಗಿದೆ. ಹಾಗೂ ರಾಜಕೀಯ ಪಕ್ಷಗಳ ಸ್ಥಿತಿಗತಿಯೂ ದಯನೀಯವಾಗಿದೆ.

ಕಮ್ಯುನಿಸ್ಟರು ಸ್ಥಗಿತವಾಗಿದ್ದಾರೆ. ಆಮ್‍ಆದ್ಮಿ, ಸ್ವರಾಜ್‍ಇಂಡಿಯಾದಂತಹ ಪ್ರಯೋಗಶೀಲ ಪಕ್ಷಗಳು ವ್ಯಾಪಕವಾಗುತ್ತಿಲ್ಲ. ಮೋದಿಶಾ ಆಡಳಿತವು ಕಾಂಗ್ರೆಸ್ ಮತ್ತು ಇನ್ನಿತರ ಪಕ್ಷಗಳನ್ನು ತೆವಳುವಂತೆ ಮಾಡಿಬಿಟ್ಟಿದೆ. ವಿಪರ್ಯಾಸವೆಂದರೆ ಈ ಮೋದಿಶಾ ಆಡಳಿತವು ಕಾಂಗ್ರೆಸ್ ಮತ್ತು ಇನ್ನಿತರ ಪಕ್ಷಗಳನ್ನು ತೆವಳುವಂತೆ ಮಾಡಿಬಿಟ್ಟಿವೆ.

ವಿಪರ್ಯಾಸವೆಂದರೆ ಈ ಮೊದಿಶಾ ಆಡಳಿತವು ಸ್ವತಃ ತನ್ನ ಪಕ್ಷ ಬಿಜೆಪಿಯನ್ನೇ ಧ್ವಂಸ ಮಾಡಿಬಿಟ್ಟಿದೆ. ಅತಿ ದೊಡ್ಡ ಪಕ್ಷ ಎನಿಸಿಕೊಂಡಿರುವ ಬಿಜೆಪಿಗೆ ಒಂದು ರಾಜಕೀಯ ಪಕ್ಷಕ್ಕೆ ಇರಬೇಕಾದ ಯಾವ ಚಹರೆಯೂ ಇಂದು ಉಳಿದಿಲ್ಲ. ಜೀವ ಇಲ್ಲದ ಸತ್ತ ದೇಹದಂತೆ ಇದೆ. ಬಿಜೆಪಿ ಪಕ್ಷದ ಹೆಸರಿನಲ್ಲಿ ಮೋದಿ-ಶಾ ಗ್ಯಾಂಗ್ ಆಡಳಿತ ನಡೆಸುತ್ತಿದೆ.

ಈ ಸಂದರ್ಭದಲ್ಲಿ ಡಾ. ಅಂಬೇಡ್ಕರ್ ಅವರು ಸಂವಿಧಾನದ ಸಭೆಯಲ್ಲಿ, ಜಾತಿ ಮತ ಭೇದದ ಕಾರಣವಾಗಿ ಭಾರತವು ಹೇಗೆ ಗುಲಾಮಗಿರಿಗೆ ತುತ್ತಾಯಿತು ಎಂಬ ಸಂಗತಿಗಳನ್ನು ವಿವರಿಸಿ ಹೇಳುತ್ತ ನೀಡುವ ಎಚ್ಚರಿಕೆಯನ್ನು ನಾವಿಂದು ಕೇಳಿಸಿಕೊಳ್ಳಬೇಕಾಗಿದೆ- “ಚರಿತ್ರೆ ಮತ್ತೆ ಮರುಕಳಿಸುತ್ತದೆಯೇ? ಈ ಯೋಚನೆ ನನ್ನಲ್ಲಿ ಆತಂಕ ಮೂಡಿಸುತ್ತದೆ.

ನಮಗೆ ಈಗಾಗಲೇ ಇದ್ದ ಹಳೆಯ ಶತ್ರುಗಳಾದ ಜಾತಿ, ಧರ್ಮಗಳ ಜೊತೆಗೆ ವಿಭಿನ್ನ ಮತ್ತು ವಿರೋಧೀ ರಾಜಕೀಯ ಸಿದ್ಧಾಂತಗಳ ಹಲವು ರಾಜಕೀಯ ಪಕ್ಷಗಳೂ ಸೇರಿಕೊಳ್ಳುತ್ತವೆ. ಈ ವಾಸ್ತವ ಅರಿವಾದ ಕೂಡಲೆ ನನ್ನ ಆತಂಕ ಇನ್ನೂ ತೀವ್ರವಾಗುತ್ತದೆ. ಭಾರತೀಯರು ದೇಶವನ್ನು ತಮ್ಮ ಮತಧರ್ಮಗಳಿಗಿಂತ ಮುಖ್ಯವೆಂದು ಭಾವಿಸುತ್ತಾರೆಯೋ ಅಥವಾ ಅವರಿಗೆ ತಮ್ಮ ದೇಶಕ್ಕಿಂತ ತಮ್ಮ ಮತಧರ್ಮಗಳೇ ಹೆಚ್ಚು ಮುಖ್ಯವಾಗುತ್ತದೋ? ನನಗೆ ಗೊತ್ತಾಗುತ್ತಿಲ್ಲ. ಆದರೆ ಇಷ್ಟಂತೂ ಖಚಿತ.

ರಾಜಕೀಯ ಪಕ್ಷಗಳು ಜಾತಿಧರ್ಮವನ್ನೇ ದೇಶಕ್ಕಿಂತ ಮುಖ್ಯ ಎಂದು ಭಾವಿಸಿದರೆ ನಮ್ಮ ಸ್ವಾತಂತ್ರ್ಯಕ್ಕೆ ಎರಡನೇ ಬಾರಿ ಗಂಡಾಂತರ ಬಂದಂತೆ. ಹಾಗೇನಾದರೂ ಆದರೆ ಬಹುಶಃ ಸ್ವಾತಂತ್ರ್ಯ ಅನ್ನುವುದು ನಮಗೆ ಮತ್ತೆ ಸಿಗುವುದಿಲ್ಲ. ಅದನ್ನು ಶಾಶ್ವತವಾಗಿ ಕಳೆದುಕೊಂಡುಬಿಡುತ್ತೇವೆ. ಇದರ ವಿರುದ್ಧ ನಾವೆಲ್ಲರೂ ಅಚಲವಾಗಿ ನಿಲ್ಲಬೇಕು. ನಮ್ಮಲ್ಲಿ ಕೊನೆಯ ಹನಿ ರಕ್ತ ಇರುವವರೆಗೆ ನಮ್ಮ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ದೃಢಸಂಕಲ್ಪ ಮಾಡಬೇಕು.”

ಈ ಕಾಲ ಈಗ ಬಂದಿದೆ. ಭಾರತದ ಪೌರತ್ವ ನಿರ್ಧಾರಕ್ಕೆ ಮತಧರ್ಮಗಳನ್ನೂ ಪರಿಗಣಿಸಿ ಸಂವಿಧಾನದ ಮೌಲ್ಯಕ್ಕೆ ಬಿಲ ತೋಡಿ ತಂತಾನೇ ಸಂವಿಧಾನದ ಆಸೆಗಳು ಕುಸಿಯುವಂತೆ ಮಾಡಲಾಗುತ್ತಿದೆ. ಹೌದು, ಇಂದು ಭಾರತ ಎರಡನೆ ಸ್ವಾತಂತ್ರ್ಯ ಹೋರಾಟಕ್ಕಾಗಿ ಯಾಚಿಸುತ್ತಿದೆ.

ಕೊನೆಯದಾಗಿ, ಇಷ್ಟಿದ್ದೂ ಹೀಗಿದ್ದೂ ಆದರೂ ಮೋದಿಯವರಿಗೆ ಒಂದು ಪ್ರಾರ್ಥನೆ ಮಾಡುವೆ. ನಿಮ್ಮ ಕಣ್ಗಳ ಕೆಳಗೆ ನಡೆದ ಜೆಎನ್‍ಯು ಘಟನೆಯನ್ನು ನೋಡಿ ತತ್ತರಿಸಿ ಹೋದೆ. ಗುಂಪು ಥಳಿತ ನೋಡಿದಾಗಲು ಈ ದೇಶದಲ್ಲಿ ರಾಜನಿಲ್ಲ (ರೂಲರ್ ಇಲ್ಲ), ಅರಾಜಕತೆ ಇದೆ ಅನ್ನಿಸುತ್ತದೆ. ಪೊಲೀಸ್ ವ್ಯವಸ್ಥೆ ಕಳಂಕಿತವಾಗಿ ಬಿಟ್ಟಿತು.

ಇನ್ನು ಮಿಲ್ಟ್ರಿಕತೆ ಏನೋ ಗೊತ್ತಿಲ್ಲ. ಇದು ಪ್ರಧಾನಿಯ ಬುಡವನ್ನೆ ಬುಡಮೇಲು ಮಾಡುತ್ತದೆ. ಮಾಂತ್ರಿಕರು ಭೂತ ಪಿಶಾಚಿಗಳನ್ನು ವಶಪಡಿಸಿಕೊಂಡು ಒಂದು ಬಾಟಲ್‍ನಲ್ಲಿ ಕೂಡಿ ಭದ್ರವಾಗಿ ಮುಚ್ಚಳ ಹಾಕಿ ಇಟ್ಟುಕೊಂಡಿರುತ್ತಾರಂತೆ. ಅವರೇನಾರು ರಾಗದ್ವೇಷಕ್ಕೆ ಒಳಗಾಗಿ ಮುಚ್ಚಳ ತೆಗೆದು ಪಿಶಾಚಿಗಳನ್ನು ತನ್ನ ಹಗೆ ಮೇಲೆ ಛೂ ಬಿಟ್ಟರೆ ಅವು ಎಲ್ಲವನ್ನೂ ತಿಂದು ಹಾಕಿ ಕೊನೆಗೆ ವಶಪಡಿಸಿಕೊಂಡಿರುವ ಮಾಂತ್ರಿಕನ ಬಳಿಗೆ ಬಂದು ಮಾಂತ್ರಿಕನನ್ನೇ ತಿಂದು ಹಾಕುತ್ತವಂತೆ.

ಒಬ್ಬ ರೂಲರ್ Negative ಆದಾಗ ಇದು ಆಗುತ್ತಾ ಬಂದಿದೆ. ಇಂಥವರಿಗೆ ಅವರ ಪಕ್ಕದಲ್ಲಿ ಇರುವವರೇ ಮೃತ್ಯು ಆಗುತ್ತಾರೆ. ತಾವು ಗುಹೆಯಲ್ಲಿ ಧ್ಯಾನ ಮಾಡುತ್ತಿರುವುದನ್ನು ಟಿವಿಯಲ್ಲಿ ನೋಡಿದ್ದರಿಂದ ಇದನ್ನು ಹೇಳಬೇಕಾಯ್ತು, ಕ್ಷಮೆ ಇರಲಿ. ತಮ್ಮ ಧ್ಯಾನವು ರಾಗದ್ವೇಷ ಇಲ್ಲದ ಮನಸ್ಸನ್ನು ಪಡೆಯುವಂತಾಗುವುದಕ್ಕೆ ಕಾರಣವಾಗಿ ಅದರಿಂದ ಆರ್ಥಿಕ ಚೇತರಿಕೆ, ಬೆಲೆ ಏರಿಕೆಯ ನಿಯಂತ್ರಣ, ಉದ್ಯೋಗ ಹೆಚ್ಚಳಕ್ಕೆ ಕಾರಣವಾದರೆ ದೇಶಕ್ಕೆ ಒಳ್ಳೆಯದು, ತಮಗೂ ಕೂಡ. ನಮಸ್ಕಾರ.

ಕೃಪೆ : ನಮ್ಮ ಬನವಾಸಿ.ಕಾಂ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶಿಕ್ಷಕರು, ವಾರ್ಡನ್‌ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ‘ಚೈಲ್ಡ್ ಹೆಲ್ಪ್‌ಲೈನ್’ ಸಂಖ್ಯೆಯನ್ನು ಪ್ರದರ್ಶಿಸಬೇಕು ಹಾಗೂ ಶಿಕ್ಷಕರು ಮತ್ತು ವಾರ್ಡನ್‌ಗಳಿಗೆ ಪೋಕ್ಸೊ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಆನ್‌ಲೈನ್ ವಂಚನೆಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಶಮ್ಲಾ ಇಕ್ಬಾಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಮ್ಮಿಕೊಳ್ಳಲಾಗಿದ್ದ ದಾವಣಗೆರೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ತಂತ್ರಜ್ಞಾನ ಆಧಾರಿತ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ‘ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್’ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಸಭೆಯಲ್ಲಿದ್ದ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಮಾಹಿತಿ ನೀಡಿ, ಈ ಯೋಜನೆಗಾಗಿ ಸುಮಾರು 20 ಕೋಟಿ ರೂಪಾಯಿಗಳ ಅನುದಾನವನ್ನು ಕೋರಲಾಗಿದ್ದು, ಪ್ರಾಥಮಿಕ ಹಂತವಾಗಿ ಕನಿಷ್ಠ 10 ಕೋಟಿ ರೂಪಾಯಿ ಬಿಡುಗಡೆಯಾದರೂ ತಕ್ಷಣವೇ ಕಾಮಗಾರಿ ಆರಂಭಿಸಲಾಗುವುದು ಎಂದರು. ಈ ಯೋಜನೆಗೆ ಸಂಬಂಧಿಸಿದಂತೆ ಸಚಿವರು ಹಾಗೂ ಐಟಿ ಇಲಾಖೆಯ ಉನ್ನತ ಅಧಿಕಾರಿಗಳು ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಿವರಿಸಿದರು.

ಪ್ರಸ್ತುತ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಲ್ಲದಿದ್ದರೂ, ಮುಂಬರುವ ಹೊಸ ಶೈಕ್ಷಣಿಕ ವರ್ಷಕ್ಕೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇನ್ನುಮುಂದೆ ಪ್ರತಿ ತಿಂಗಳು ವಸತಿ ನಿಲಯಗಳಲ್ಲಿ ಸಂಜೆ ವೇಳೆ ಅರ್ಧ ಗಂಟೆಗಳ ಕಾಲ ವಚನ ಸಾಹಿತ್ಯ, ದಲಿತ ಸಾಹಿತ್ಯ ಹಾಗೂ ಮಹಿಳಾ ಸಾಹಿತ್ಯದ ಕುರಿತು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಮುಂದಿನ ತಿಂಗಳಿಂದ ಮಾನ್ಯ ಸಂಸದರ ನೇತೃತ್ವದಲ್ಲಿ ಇದಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದ ಸಮಾಜ ಕಲ್ಯಾಣ, ಬಿ.ಸಿ.ಎಂ, ಅಲ್ಪಸಂಖ್ಯಾತರ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಎಲ್ಲಾ ವಸತಿ ನಿಲಯಗಳಿಗೆ ಸ್ವಂತ ನಿವೇಶನಗಳನ್ನು ಮಂಜೂರು ಮಾಡಲಾಗಿದ್ದು, ಅನುದಾನ ಬಂದ ತಕ್ಷಣ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ವಸತಿ ನಿಲಯದ ಮಕ್ಕಳಿಗೆ ‘ಹೆಲ್ತ್ ಕಾರ್ಡ್’ ವಿತರಿಸಲಾಗುತ್ತಿದ್ದು, ಪ್ರತಿ ತಿಂಗಳು ಕಡ್ಡಾಯ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆ ವಿಶೇಷ ಶ್ರಮವಹಿಸುತ್ತಿದ್ದು, ಫಲಿತಾಂಶದಲ್ಲಿ ಹಿಂದುಳಿದಿರುವ ಶಾಲೆಗಳನ್ನು ಅಧಿಕಾರಿಗಳು ದತ್ತು ಪಡೆದುಕೊಂಡು ನಿರಂತರ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಸಿಇಒ ಸ್ವತಃ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಗುಣಮಟ್ಟವನ್ನು ಪರಿಶೀಲಿಸುತ್ತಿದ್ದು, ಹಿಂದುಳಿದ ವಿದ್ಯಾರ್ಥಿಗಳಿಗೆ ಮುಂಜಾನೆ ಮತ್ತು ಸಂಜೆ ವಿಶೇಷ ತರಗತಿಗಳನ್ನು ಆಯೋಜಿಸುತ್ತಿದ್ದಾರೆ ಎಂದರು.

ಕಳೆದ ವರ್ಷ ಜಿಲ್ಲೆಯಲ್ಲಿ ಯಾವುದೇ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರಲಿಲ್ಲ. ಆದರೆ, ಕಳೆದ ತಿಂಗಳು ಶಾದಿಮಹಲ್‌ನಲ್ಲಿ ನಡೆಯುತ್ತಿದ್ದ ವಿವಾಹವೊಂದರ ಮೇಲೆ ದಾಳಿ ನಡೆಸಿ, ಅಪ್ರಾಪ್ತ ಬಾಲಕಿಯರ ಬಾಲ್ಯವಿವಾಹವನ್ನು ಯಶಸ್ವಿಯಾಗಿ ತಡೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು. ಇನ್ನು ಮುಖ್ಯ ಕಾರ್ಯದರ್ಶಿಗಳ ಆದೇಶದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸಿ.ಇ.ಒ ಅವರು ಜಿಲ್ಲೆಯ ಆಸ್ಪತ್ರೆಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೆಲವು ನರ್ಸಿಂಗ್ ಹೋಂಗಳಲ್ಲಿ ಶೇಕಡಾ 100 ರಷ್ಟು ಸಿಸೇರಿಯನ್ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ, ವೈದ್ಯರ ಸಭೆ ಕರೆದು ಕಡ್ಡಾಯವಾಗಿ ನೈಸರ್ಗಿಕ ಹೆರಿಗೆಗೆ ಆದ್ಯತೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣವನ್ನು ಯಶಸ್ವಿಯಾಗಿ ನಿಯಂತ್ರಿಸಲಾಗಿದ್ದು, ಪ್ರಸ್ತುತ ಇದು ರಾಜ್ಯದ ಸರಾಸರಿಗಿಂತ ಕಡಿಮೆ ಇರುವುದು ಜಿಲ್ಲೆಯ ದೊಡ್ಡ ಸಾಧನೆಯಾಗಿದೆ. ಜಿಲ್ಲೆಯಲ್ಲಿ ಸದ್ಯ ಚರ್ಮರೋಗ ತಜ್ಞರು, ಸ್ತ್ರೀರೋಗ ತಜ್ಞರು ಹಾಗೂ ಅರಿವಳಿಕೆ ತಜ್ಞರ ಹುದ್ದೆಗಳು ಖಾಲಿ ಇದ್ದು, ಲಭ್ಯವಿರುವ ಸಂಪನ್ಮೂಲಗಳಲ್ಲೇ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಕೃಷಿ, ನೀರಾವರಿ ಹಾಗೂ ನಾಗರಿಕ ಸೌಲಭ್ಯಗಳು

ಮುಂಬರುವ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸಂಪೂರ್ಣ ಸಜ್ಜಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ. ಅಡಿಕೆ-ತೆಂಗಿನ ಜೊತೆಗೆ ಹಣ್ಣು ಮತ್ತು ತರಕಾರಿ ಬೆಳೆಗಳಿಗೂ ಉತ್ತೇಜನ ನೀಡಲಾಗುತ್ತಿದ್ದು, ಹನಿ ನೀರಾವರಿ ಯೋಜನೆ ಸಬ್ಸಿಡಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ.

ಗ್ರಾಮೀಣ ಭಾಗದ ‘ಜಲಜೀವನ್ ಮಿಷನ್’ ಯೋಜನೆಯಡಿ ಪೈಪ್‌ಲೈನ್ ಮತ್ತು ನಲ್ಲಿ ಸಂಪರ್ಕ ಕಾರ್ಯಗಳು ಕೊನೆಯ ಹಂತದಲ್ಲಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗದಂತೆ ಇಂಜಿನಿಯರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ನಗರದ ಪ್ರಮುಖ ರಸ್ತೆಗಳ ನವೀಕರಣ, ಸ್ಮಾರ್ಟ್ ರಸ್ತೆಗಳ ನಿರ್ಮಾಣ ಹಾಗೂ ಒಳಚರಂಡಿ ಆಧುನೀಕರಣ ಪ್ರಗತಿಯಲ್ಲಿದೆ. ಘನತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ವ್ಯವಸ್ಥಿತಗೊಳಿಸಲು ಸೂಚಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ದಾವಣಗೆರೆಯಲ್ಲಿ ಬೀದಿನಾಯಿಗಳಿಗೆ ವ್ಯಾಕ್ಸಿನೇಷನ್ ಮತ್ತು ಸ್ಟೆರಿಲೈಸೇಶನ್ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದ್ದು, ಈಗಾಗಲೇ ಶೇಕಡಾ 80 ರಷ್ಟು ಯಶಸ್ಸು ಸಾಧಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಡಾ. ಶೇಖರ್‌ ಹೆಚ್.ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಗಿತ್ತೆ ಮಾಧವ ವಿಠ್ಠಲರಾವ್‌ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending