ಸಿನಿ ಸುದ್ದಿ
ಕಟ್ಟ ಕಡೆಯ ಬಿಂದು-ಇದ್ದೆಡೆಯೇ ಕಂಡಾಗ
- ನಾ ದಿವಾಕರ
ಬುಧವಾರ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನರಾಗಿದ್ದು ತಿಳಿದಾಗ ಕೆಲವು ಕ್ಷಣ ಮಾತೇ ಹೊರಡಲಿಲ್ಲ. ಇತ್ತೀಚೆಗೆ ಕಂಬನಿ ಬತ್ತಿ ಹೋಗಿದೆ ಇಲ್ಲದಿದ್ದರೆ ಸುರಿದುಹೋಗುತ್ತಿತ್ತೇನೋ ! ಆದರೂ ಕಣ್ಣಾವೆಗಳು ವದ್ದೆಯಾದ ಅನುಭವ. ನೂರಾರು ಚಿತ್ರಗಳಲ್ಲಿ ನಟಿಸಿದವರಲ್ಲ, ಗಗನದೆತ್ತರದ ಕಟೌಟ್ ನೋಡಿರುವ ಆರಾಧ್ಯ ದೈವ ಎನಿಸಿಕೊಂಡವರಲ್ಲ. ಅಭಿಮಾನಿ ಸಂಘಗಳಿಗೆ ಪಾತ್ರರಾದವರಲ್ಲ. ಬಹುಶಃ 35 ವರ್ಷಗಳ ಪಯಣದಲ್ಲಿ ತಮಗೆ ಲಭಿಸಿದ ಅವಕಾಶವನ್ನು ಕೊಂಚವೂ ರಾಜಿ ಮಾಡಿಕೊಳ್ಳದೆ ನ್ಯಾಯಸಲ್ಲಿಸಿದ ಕೆಲವೇ ನಟರಲ್ಲಿ ಇರ್ಫಾನ್ ಒಬ್ಬರು.
ಅವರು ಇಷ್ಟವಾಗುವುದೂ ಈ ಕಾರಣಕ್ಕೇ. ಸಂಭಾಷಣೆಯ ವೈಖರಿ, ಕಂಗಳಲ್ಲೇ ಭಾವ ಸ್ಫುರಿಸುವ ಅದ್ಭುತ ಕಲಾಭಿವ್ಯಕ್ತಿ, ಪಾತ್ರದೊಳಗೆ ಪರಕಾಯ ಪ್ರವೇಶ, ಅಭಿನಯದಲ್ಲಿ ತಲ್ಲೀನತೆ ಮತ್ತು ತಾವು ನಿರ್ವಹಿಸುವ ಪಾತ್ರವನ್ನು ಪರದೆಯ ಹೊರ ತಂದು ನೋಡುವವರ ಮಧ್ಯೆ ನಿಲ್ಲಿಸುವಂತಹ ಕಲಾತ್ಮಕತೆ ಇವೆಲ್ಲವೂ ಇರ್ಫಾನ್ ಅವರನ್ನು ಅದ್ಭುತ ನಟನನ್ನಾಗಿ ಮಾಡಿತ್ತು.
ಅವರಲ್ಲಿ ಗಮನಿಸಬಹುದಾದ ಮತ್ತೊಂದು ಅಂಶ, ಯಾವುದೇ ಅನುಕರಣೆ ಇರಲಿಲ್ಲ. ಅವರಿಗೆ ಗಾಡ್ ಫಾದರ್ ಸಹ ಇರಲಿಲ್ಲವೆನ್ನಿ. ತಮ್ಮ ಕಲಾ ಸಾಮರ್ಥ್ಯದ ಮೇಲೆ ತಾವೇ ನಿರ್ಮಿಸಿಕೊಂಡ ಕಲಾ ಪ್ರಪಂಚದಲ್ಲಿ ವಿಶ್ವದಾದ್ಯಂತ ಜನಪ್ರಿಯತೆ ಪಡೆದ ನಟ. ಕೆಲವೊಮ್ಮೆ ಸೈಯೀದ್ ಜಾಫ್ರಿ ನೆನಪಾಗುತ್ತಾರೆ. ಪಾತ್ರಗಳಲ್ಲಿ ಜೀವಂತಿಕೆಯನ್ನು ತುಂಬಲು ತಮ್ಮ ಕಣ್ಣುಗಳೇ ಸಾಕು ಎನ್ನುವ ಕೆಲವೇ ಸಮಕಾಲೀನ ನಟರು ನಮ್ಮ ನಡುವೆ ಇದ್ದಾರೆ/ಇದ್ದರು. ಸೈಯಿದ್ ಜಾಫ್ರಿ, ನಾಸಿರುದ್ದಿನ್ ಶಾ, ಕಮಲ ಹಾಸನ್, ಅನುಪಮ್ ಖೇರ್, ಫರೂಕ್ ಶೇಖ್, ನಾನಾ ಪಾಟೇಕರ್ ಮತ್ತು ಇರ್ಫಾನ್ ಖಾನ್.
ಇರ್ಫಾನ್ ಈಗ ಇದ್ದರು ಎನ್ನುವ ಸಾಲಿಗೆ ಸೇರಿದ್ದಾರೆ. ಒಬ್ಬ ನಟ ಪರದೆಯ ಮೇಲೆ ಬಿಂಬಿಸುವ ಮೌಲ್ಯಗಳೇ ಬೇರೆ, ನಿತ್ಯ ಜೀವನದಲ್ಲಿ ಅನುಸರಿಸುವ ಮೌಲ್ಯಗಳೇ ಬೇರೆ ಎನ್ನುವುದು ದಿಟ. ಆದರೆ ಜನಮಾನಸದಲ್ಲಿ ತಮ್ಮ ಅಭಿನಯ ಕಲೆಯಿಂದ ಮನೆ ಮಾಡಿದ ಕಲಾವಿದ ಜನಸಾಮಾನ್ಯರ ತುಡಿತಗಳಿಗೆ ಸ್ಪಂದಿಸಿದರೆ ಎಷ್ಟು ಆಪ್ತರಾಗಬಹುದು ? ಈ ಪ್ರಶ್ನೆಗೆ ಇರ್ಫಾನ್ ಅಂಥವರು ಮಾತ್ರ ಉತ್ತರ ನೀಡಲು ಸಾಧ್ಯ. ಅದಕ್ಕೇ ಇರ್ಫಾನ್ ಭಾಯಿ ಇಷ್ಟವಾಗುತ್ತಾರೆ.
53, ಸಾಯುವ ವಯಸ್ಸಲ್ಲ. ಆದರೆ ಅವರು ಎದುರಿಸಿದ ಖಾಯಿಲೆಗೆ ಒಂದರಿಂದ ನೂರು ಲೆಕ್ಕವೇ ಗೊತ್ತಿಲ್ಲ. ಕರೆದುಕೊಂಡು ಹೋಗಲೆಂದೇ ಬಂದ ಖಾಯಿಲೆಯೊಡನೆ ಎರಡು ವರ್ಷಗಳ ಕಾಲ ಸೆಣಸಿ ಇರ್ಫಾನ್ ವಿದಾಯ ಹೇಳಿದ್ದಾರೆ. 2018ರಲ್ಲಿ ಅವರು ಲಂಡನ್ನಿನ ಆಸ್ಪತ್ರೆಗೆ ದಾಖಲೆಯಾಗಿದ್ದಾಗ ಬರೆದ ಪುಟ್ಟ ಬರಹ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ. ಅದರ ಕೆಲವು ಸಾಲುಗಳು ಹೀಗಿವೆ :- ನಾನು ವೇಗವಾಗಿ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದೆ. ಕನಸುಗಳು, ಯೋಜನೆಗಳು, ಗುರಿಗಳು ಎಲ್ಲವುಗಳಲ್ಲಿ ಎಂಗೇಜ್ ಆಗಿದ್ದೆ. ಥಟ್ಟನೆ ಯಾರೋ ಭುಜ ತಟ್ಟಿದಂತಾಯಿತು, ತಿರುಗಿ ನೋಡಿದರೆ ಟಿ ಸಿ ನಿಂತಿದ್ದರು “ ನೀವು ತಲುಪಬೇಕಾದ ಸ್ಥಳ ಬಂದಿದೆ, ಪ್ಲೀಸ್ ಇಳಿದುಬಿಡಿ ಎಂದರು, ಇಲ್ಲ ಇಲ್ಲ ನಾನು ತಲುಪಬೇಕಾದ ಸ್ಥಳ ಇನ್ನೂ ಬಂದಿಲ್ಲ ಎಂದೆ, ಇಲ್ಲ ಇದೇ ಅದು ಕೆಲವೊಮ್ಮೆ ಹಾಗೆಯೇ ಆಗುತ್ತೆ ”. ಓಹ್ ಸಾವಿನ ನಿರೀಕ್ಷೆಯಲ್ಲಿರುವ ಒಬ್ಬ ವ್ಯಕ್ತಿ ಈ ರೀತಿಯ ರೂಪಕವನ್ನು ಬರೆಯುವುದೆಂದರೆ ಅಚ್ಚರಿಯಾಗುವುದಲ್ಲವೇ ?
ಇರ್ಫಾನ್ ಹೀಗೆ ಬರೆದಿದ್ದನ್ನು ಅನುವಾದಿಸಿದ ವೇಣುಗೋಪಾಲ್ ಶೆಟ್ಟಿಯವರಿಗೆ ಸಾವಿರ ವಂದನೆಗಳು. ಹಂಚಿಕೊಂಡ ವಿನುತಾ ವಿಶ್ವನಾಥ್ ಮತ್ತು ಪುರುಷೋತ್ತಮ್ ಬಿಳಿಮಲೆಯವರಿಗೂ. ಜೀವನ ದರ್ಶನ ಮಾಡಿಸುವ ಇಂತಹ ಮಾತುಗಳು ಕೆಲವೊಮ್ಮೆ ಐಡಿಯಲಿಸ್ಟಿಕ್ ಎನಿಸಬಹುದು ಅಥವಾ ಭಾವನಾತ್ಮಕವೋ, ಅಧ್ಯಾತ್ಮವೋ ಎನಿಸಬಹುದು. ಆದರೆ ಈ ರೀತಿ ಸಾವಿನ ನಿರೀಕ್ಷೆಯಲ್ಲಿರುವವರೊಡನೆ ಬದುಕಿದವರಿಗೆ ಇದು ಹೆಚ್ಚು ಆಪ್ತ ಎನಿಸುತ್ತದೆ. ಇರ್ಫಾನ್ ಎರಡು ವರ್ಷಗಳ ಕಾಲ ಹೀಗೆ ಅಂತ್ಯದ ನಿರೀಕ್ಷೆಯಲ್ಲೇ ಬದುಕಿ ಮರ್ತ್ಯ ಮೀರಿ ನಿಲ್ಲಲು ಯತ್ನಿಸಿದ್ದಾರೆ.
ಅವರೇ ತಮ್ಮ ಪತ್ರದಲ್ಲಿ ಹೇಳಿರುವಂತೆ “ ಸಾಗರದಲ್ಲಿ ತೇಲುತ್ತಿರುವ ಮರದ ತೊಗಟೆಯಂತಿರುವ ನಿಮಗೆ ಅಲ್ಲಿನ ಅಲೆಗಳು ಹೇಗಿರಬಹುದೆಂದು ಊಹಿಸಲೂ ಅಸಾಧ್ಯವಾಗುತ್ತದೆ, ಅವುಗಳನ್ನು ನಿಯಂತ್ರಿಸಲು ನೀರು ಹತಾಶರಾಗಿ ಪ್ರಯತ್ನಿಸುತ್ತೀರಿ ” ಮತ್ತೊಂದು ರೂಪಕ. ಬದುಕುವ ಛಲ ಮತ್ತು ಸಾವಿನ ನಿರೀಕ್ಷೆಯ ನಡುವೆ ಸಂಘರ್ಷ ಎಂದರೆ ಇದೇ ಅಲ್ಲವೇ ? ಎಂತಹ ಬರಹ ಬಿಟ್ಟುಹೋಗಿದ್ದೀರಿ ಇರ್ಫಾನ್. ಒಂದೇ ಪುಟ ಇದ್ದರೂ ಬೃಹತ್ ಕಾವ್ಯದಂತೆ ಭಾವ ಸ್ಫುರಿಸಿದೆ. ನೀವು ನಿಜಕ್ಕೂ ಧನ್ಯ ಇರ್ಫಾನ್ ಭಾಯ್.
ಇರ್ಫಾನ್ಖಾನ್ ಅವರ ಸಾವಿನ ಸುದ್ದಿ ಖಿನ್ನತೆ ಮೂಡಿಸಿತ್ತು
ಮಧ್ಯಾಹ್ನ ಕೊರೋನಾ ಇಲ್ಲದ ಸುದ್ದಿಯನ್ನು (ಕನ್ನಡ ಸುದ್ದಿಮನೆಯಲ್ಲ) ನೋಡಲು ಅವಕಾಶ ಸಿಕ್ಕಿತೆಂಬ ಸಣ್ಣ ಖುಷಿ ಒಂದೆಡೆಯಾದರೆ ಇರ್ಫಾನ್ಖಾನ್ ಅವರ ಸಾವಿನ ಸುದ್ದಿ ಖಿನ್ನತೆ ಮೂಡಿಸಿತ್ತು. ನೆನ್ನೆ ರಾತ್ರಿ ಏನೋ ನೆನಪಾಯಿತು. ರಾಜೇಶ್ ಖನ್ನಾ-ಅಮಿತಾಬ್ ನಟನೆಯ, ಹೃಷಿಕೇಶ್ ಮುಖರ್ಜಿಯ ಆನಂದ್ ಚಿತ್ರ ನೆನಪಾಯಿತು. ನೋಡಿದಾಗಲೆಲ್ಲಾ ಕಣ್ಣು ವದ್ದೆ ಮಾಡುವ ಚಿತ್ರ ಅದು. ಹಾಗೆಯೇ ಸಾವು ಬದುಕಿನ ಸಂಘರ್ಷವನ್ನು, ಸಾವಿನ ನಿರೀಕ್ಷೆಯಲ್ಲಿರುವ ಒಬ್ಬ ಸರಳ ವ್ಯಕ್ತಿಯ ಕಣ್ಣುಗಳ ಮೂಲಕ ತೋರಿಸುವ ಚಿತ್ರವೂ ಹೌದು. ರಾಜೇಶ್ ಖನ್ನನ ಬದುಕಿನ ಮೈಲಿಗಲ್ಲು ಈ ಚಿತ್ರ. ಈ ಚಿತ್ರದ ಕೆಲವು ಸಂಭಾಷಣೆಗಳು ಸಾರ್ವಕಾಲಿಕವಾದವು, ಸಾರ್ವತ್ರಿಕವಾದವೂ ಹೌದು. ಕ್ಯಾನ್ಸರ್ ಇರುವ ಒಬ್ಬ ಕವಿ ಹೃದಯದ ವ್ಯಕ್ತಿ ಇನ್ನು ಆರು ತಿಂಗಳಲ್ಲಿ ತಾನು ಈ ಲೋಕದಲ್ಲಿ ಇರುವುದಿಲ್ಲ ಎಂದು ತಿಳಿದಿದ್ದರೂ , ಜೀವನವನ್ನು ನೋಡುವ ಬಗೆ, ಅದ್ಭುತ. ಚಿತ್ರ ನೋಡಿಯೇ ಆಸ್ವಾದಿಸಬೇಕು.
ಈ ಚಿತ್ರದಲ್ಲಿ ಕಾಕಾನ (ರಾಜೇಶ್ ಖನ್ನನ ಅಡ್ಡಹೆಸರು) ಕೆಲವು ಸಂಭಾಷಣೆಗಳಿವೆ. ಆನಂದ್ಗೆ ಕ್ಯಾನ್ಸರ್ ಗಡ್ಡೆ ಇದೆ ಎಂದು ತಿಳಿದಾಗ “ ನಾನು ಇನ್ನು ಆರು ತಿಂಗಳಿಗಿಂತಲೂ ಹೆಚ್ಚು ಬದುಕುವುದಿಲ್ಲ. 70 ವರ್ಷಕ್ಕೂ ಆರು ತಿಂಗಳಿಗೂ ಏನು ವ್ಯತ್ಯಾಸವಿದೆ , ಮುಂದಿನ ಆರು ತಿಂಗಳಲ್ಲಿ ಲಕ್ಷಾಂತರ ಕ್ಷಣಗಳನ್ನು ಬದುಕುವವರ ಪಾಡೇನು ? ಬದುಕು ದೀರ್ಘವಾಗಿರಬೇಕಿಲ್ಲ ಉತ್ತಮವಾಗಿರಬೇಕು, ನಾನು ಬದುಕಿರುವವರೆಗೂ ಸತ್ತಿರುವುದಿಲ್ಲ ಸತ್ತ ನಂತರ ನಾನೇ ಇರುವುದಿಲ್ಲ ” ಇದು ಆನಂದ್ ಒಬ್ಬ ವೈದ್ಯನಿಗೆ, ಅಮಿತಾಬ್ಗೆ ಹೇಳುವ ಮಾತುಗಳು. ಮತ್ತೊಂದು ದೃಶ್ಯದಲ್ಲಿ “ ಪ್ರತಿಯೊಂದು ನಗುವಿನ ಹಿಂದೆಯೂ ಖುಷಿಯೇ ಇರಬೇಕೆಂದಿಲ್ಲ ಬಾಬುಮೊಷಾಯ್ ಕೆಲವೊಮ್ಮೆ ದುಃಖವೂ ಇರುತ್ತದೆ ” ಎನ್ನುತ್ತಾನೆ. ಒಮ್ಮೆ ಆನಂದನ ಗೆಳೆಯನ ಮಡದಿ ತನ್ನ ಹುಟ್ಟುಹಬ್ಬದ ದಿನ ಅವನ ಆಶೀರ್ವಾದ ಬಯಸುತ್ತಾಳೆ ಆಗ ಆನಂದ್ “ ನಿನಗೆ ಏನೆಂದು ಹಾರೈಸಲಿ ತಂಗಿ, ನನ್ನ ಆಯಸ್ಸನ್ನು ನಿನಗೆ ಕೊಡು ಎಂದು ದೇವರಲ್ಲಿ ಕೇಳಲೂ ಆಗುವುದಿಲ್ಲ ” ಎಂದು ಮನದಲ್ಲೇ ಪರಿತಪಿಸುತ್ತಾನೆ.
ಮತ್ತೊಂದು ಮನಮಿಡಿಯುದ ದೃಶ್ಯದಲ್ಲಿ ಅಮಿತಾಬ್ ಒಬ್ಬ ವೈದ್ಯನಾಗಿ ಆನಂದ್ಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಹೇಳುತ್ತಾನೆ . ಆಗ ಆನಂದ್ “ ಇನ್ನೆಷ್ಟು ದಿನ ನನಗೆ, ನಿನ್ನ ದಿನಗಳು ಮುಗಿಯುತ್ತಿವೆ ಎಂದು ನೆನಪುಮಾಡುತ್ತೀಯ ಬಾಬುಮೊಷಾಯ್, ಈವರೆಗೂ ಯಾರೂ ತನ್ನ ಸಾವನ್ನು ಕಂಡಿಲ್ಲ ಆದರೆ ನಾನು ದುರ್ಭಾಗ್ಯನು, ಪ್ರತಿಕ್ಷಣವೂ ನನ್ನ ಸಾವನ್ನು ಕಾಣುತ್ತಿದ್ದೇನೆ , ನಿನ್ನ ನೋವು ತುಂಬಿದ ಕಣ್ಣುಗಳಲ್ಲಿ ” ಎಂದು ಹೇಳುತ್ತಾನೆ. ಅಂತ್ಯದ ನಿರೀಕ್ಷೆಯಲ್ಲಿರುವ ಒಂದು ಜೀವ ಮತ್ತೊಂದು ಜೀವದ ಕಣ್ಣುಗಳಲ್ಲಿ ಜೀವಂತಿಕೆ ಬಯಸುತ್ತದೆ. ಇಂತಹ ದೃಶ್ಯ ರೂಪಕಗಳು ಬಹುಶಃ ಈಗಿನ ಚಿತ್ರಗಳಲ್ಲಿ ಕನಸಿನ ಮಾತೆನ್ನಿ.
ಇರ್ಫಾನ್ ಇದೇ ಪ್ರಯತ್ನ ಮಾಡಿ ಹೊರಟುಬಿಟ್ಟಿದ್ದಾರೆ
ಈ ಆನಂದ್ ಚಿತ್ರ ನನಗೆ ಬಹಳ ಆಪ್ತವಾದದ್ದು. ಇದಕ್ಕೆ ಕಾರಣವೂ ಇದೆ. ತನ್ನ ಬದುಕಿನ ಪಯಣ ಇನ್ನು ಕೆಲವೇ ದಿನಗಳಲ್ಲಿ, ವರ್ಷಗಳಲ್ಲಿ ಅಂತ್ಯವಾಗುತ್ತದೆ ಎಂದು ತಿಳಿದಿದ್ದೂ ಸದಾ ಹರ್ಷಚಿತ್ತನಾಗಿರುವ ಆನಂದ್ ಬಹಳ ಆಪ್ತ ಎನಿಸುತ್ತಾನೆ. ಏಕೆಂದರೆ ಅವನು ಬದುಕು ಮತ್ತು ಸಾವು ಎರಡನ್ನೂ ಗೆಲ್ಲಲು ಯತ್ನಿಸುತ್ತಾನೆ. ಬಹುಶಃ ಇರ್ಫಾನ್ ಇದೇ ಪ್ರಯತ್ನ ಮಾಡಿ ಹೊರಟುಬಿಟ್ಟಿದ್ದಾರೆ.
ನನ್ನೊಡನೆ ನಾಲ್ಕು ದಶಕಗಳ ಕಾಲ ಬದುಕಿ ತನ್ನ ಪಯಣ ಮುಗಿಸಿದ ನನ್ನ ಸೋದರ ನಾಗರಾಜ್ ಇದೇ ಸನ್ನಿವೇಶದಲ್ಲೇ ಬದುಕಿದ್ದನ್ನು ಕಂಡಿದ್ದೇನೆ. ಅವನಿಗೆ ವಿ ಎಸ್ ಡಿ (ventricular septal defect)ತೊಂದರೆ ಇತ್ತು. ಅಂದರೆ ಹೃದಯದ ಹೃತ್ಕುಕ್ಷಿಗಳನ್ನು ಬೇರ್ಪಡಿಸುವ ಗೋಡೆ (ಸೆಪ್ಟಮ್)ಯಲ್ಲಿ ಒಂದು ರಂಧ್ರ ಇತ್ತು. ರಕ್ತ ಎಡದಿಂದ ಬಲಕ್ಕೆ ಹರಿಯುತ್ತಿದ್ದುದರಿಂದ, ಆಮ್ಲಜನಕದ ಅಂಶ ಹೆಚ್ಚಾಗಿರುವ ರಕ್ತ ಶ್ವಾಸಕೋಶದೊಳಗೆ ಹೋಗುತ್ತಿತ್ತು. ಆಗ ಹೃದಯ ಬಡಿತದ ವೇಗ ಹೆಚ್ಚಾಗುತ್ತಿತ್ತು. ಶ್ರಮವಹಿಸುವ ಯಾವುದೇ ಕೆಲಸ ಮಾಡಲಾಗುತ್ತಿರಲಿಲ್ಲ. ಹುಟ್ಟಿನಿಂದಲೇ ಬಂದ ಸಮಸ್ಯೆ, ಚಿಕಿತ್ಸೆ ನೀಡಲಿಲ್ಲವೆನ್ನಿ.
ನಮಗಿಬ್ಬರಿಗೂ ಕೆನರಾ ಬ್ಯಾಂಕಿನಲ್ಲಿ ಒಮ್ಮೆಲೆ ನೌಕರಿ ದೊರೆತಾಗ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕಿತ್ತು. ಇವನಿಗೆ ಇದ್ದ ಸಮಸ್ಯೆಯನ್ನು ನೋಡಿ ವೈದ್ಯರು ನಿರಾಕರಿಸಿಬಿಟ್ಟರು. ನೌಕರಿ ಇಲ್ಲದಿದ್ದರೆ ನಮ್ಮ ಬದುಕೂ ಇಲ್ಲ ಎನ್ನುವ ಪರಿಸ್ಥಿತಿ. ಹೇಗೋ ವೈದ್ಯರ ಕಾಲು ಹಿಡಿದು ಪ್ರಮಾಣಪತ್ರ ಗಿಟ್ಟಿಸಿಕೊಂಡೆವು. ಆಗ ನಮಗೆ ಮತ್ತು ಅವನಿಗೆ ತಿಳಿದ ವಿಷಯ, ಅವನ ಆಯಸ್ಸು 40 ವರ್ಷ ಮಾತ್ರ ಎನ್ನುವುದು. ನಮ್ಮ ಕಣ್ಣೀರು ಕೋಡಿ ಹರಿಯಿತು, ಅವನು ವಿಚಲಿತನಾಗಲಿಲ್ಲ. ಐದು ಮೆಟ್ಟಿಲುಗಳಿಗಿಂತಲೂ ಹೆಚ್ಚು ಹತ್ತಲಾಗುತ್ತಿರಲಿಲ್ಲ. ಓಡುವುದು ಸಾಧ್ಯವೇ ಇರಲಿಲ್ಲ. ಭಾರ ಎತ್ತುವುದು ಅಸಾಧ್ಯವಾಗಿತ್ತು. ಬ್ಯಾಂಕಿನಲ್ಲಿ (ಆಗ ಲೆಡ್ಜರ್ ಇದ್ದ ಕಾಲ 1984) ಲೆಡ್ಜರ್ ಎತ್ತಿಕೊಡಲು ಯಾರಾದರೂ ಬರಬೇಕಿತ್ತು. ಮೊದಲ ಅಂತಸ್ತಿನಲ್ಲಿದ್ದ ವಿಭಾಗ ಅವನಿಗೆ ನಿಷಿದ್ಧ ಏಕೆಂದರೆ ಮೆಟ್ಟಿಲು ಹತ್ತಲಾಗುತ್ತಿರಲಿಲ್ಲ. ಮನೆಯಲ್ಲಿ ನನ್ನ ರಕ್ಷಣೆ ಮತ್ತು ನೆರವು ಇತ್ತೆನ್ನಿ.
ಇರ್ಫಾನ್ ಖಾನ್ ಬದುಕು ಮತ್ತು ಆನಂದ್ ಚಿತ್ರವನ್ನು ನೋಡುವಾಗ ಅವನ ನೆನಪಾಗುತ್ತದೆ. “ ಈ ಆ್ಯಮ್ ಎ ಹೋಲ್ ಹಾರ್ಟೆಡ್ ಮ್ಯಾನ್ ” ಎನ್ನುತ್ತಿದ್ದ. ಯಾರಾದರೂ ಏಕೆ ಎಂದು ಕೇಳಿದರೆ ಹಾರ್ಟ್ನಲ್ಲಿ ಹೋಲ್ ಇದೆ ಅದಕ್ಕೇ ಎನ್ನುತ್ತಿದ್ದ. ಹೀಗೆ ಅವನ ಹಾಸ್ಯ ಮಿಶ್ರಿತ ಮಾತುಗಳು. ಹತ್ತು ನಿಮಿಷ ನಡೆದರೆ ಅವನ ಹೃದಯ ಬಡಿತ ಐದು ಆಡಿ ದೂರಕ್ಕೆ ಕೇಳುತ್ತಿತ್ತು. ಸುಸ್ತಾಗಿ ಕುಳಿತುಬಿಡುತ್ತಿದ್ದ. ಎಷ್ಟೋ ಬಾರಿ ಅವನ ಇಡೀ ಭಾರವನ್ನು ನನ್ನ ಹೆಗಲ ಮೇಲೆ ಹೊತ್ತು ನಡೆಸಿದ್ದೆ. ಹೈದರಾಬಾದ್ ನೋಡಲು ಹೋದಾಗ ಅವನಿಗೆ ಮೇಲೆ ಹತ್ತಲಾಗುವುದಿಲ್ಲ ಎಂದು ನಾನೂ ಸಹ ಗೋಲ್ಕೊಂಡಾ, ಚಾರ್ ಮಿನಾರ್ ಒಳಗೆ ಹೋಗದೆ ಬಂದಿದ್ದೆ. ಅವನ ಜೀವನ ಬೇಗನೆ ಕೊನೆಯಾಗುತ್ತದೆ ಎಂದು ತಿಳಿದಿದ್ದೂ ಸದಾ ಎಲ್ಲರನ್ನೂ ನಗಿಸುತ್ತಲೇ ಬದುಕು ಸವೆಸಿದ ಸೋದರ ಅಗಲಿ 19 ವರ್ಷ ಕಳೆದಿದೆ. ಈಗಲೂ ಅವನ ಕೆಲವು ಜೋಕ್ಸ್ ನೆನಪಾಗುತ್ತವೆ. ಒಂದೆರಡು ತುಣುಕುಗಳು :
1. “ ಮೇನೇಜರ್ : ನಾಗರಾಜ್ ಇಲ್ಲಿ ಬನ್ನಿ ದುಬೈನಿಂದ ಬೇಗ್ ಬಂದಿದ್ದಾರೆ
ಇವನು : ಯಾಕ್ಸಾರ್ ನಿಧಾನವಾಗೇ ಬರಬಹುದಿತ್ತಲ್ಲವೇ ? ”
2. “ ಗೆಳೆಯ (ಮುಸ್ಲಿಂ) : ನಾಗರಾಜ್ ಜೀ ನನಗೆ ಗಂಡು ಮಗು ಹುಟ್ಟಿದೆ
ಇವನು : ಈದ್ ಮುಬಾರಕ್ ಜೀ !!
ಗೆಳೆಯ : ಏನ್ ದಿವಾಕರ್ ಮಗು ಹುಟ್ಟಿದ್ರೆ ಇವ್ನು ಈದ್ ಮುಬಾರಕ್ ಅಂತಾನೆ
ಇವನು : ಸಾರಿ, ಈದಿದ್ದಕ್ಕೆ ಮುಬಾರಕ್ !!!! ”
3. “ ನನ್ನ ಮದುವೆಯ ಸಂದರ್ಭ. ನನ್ನ ಭಾವಿ ಮಾವನರು ಕುಟುಂಬದವರೊಡನೆ ಮನೆಗೆ ಬಂದಿದ್ದರು.
ನನ್ನ ಸೋದರಿ : ಸರ್ ನಿಮಗೆ ಎಷ್ಟು ಮಕ್ಕಳು ?
ಭಾವಿ ಮಾವನವರು : ಹನ್ನೆರಡು ಜನ ಆರು ಗಂಡು ಆರು ಹೆಣ್ಣು
ನನ್ನ ಸೋದರಿ : ನೀವು ಏನು ಕೆಲಸ ಮಾಡ್ತಿದ್ರೀ ?
ಇವನು : ಅದೇ ಕೆಲ್ಸ !!!!!! ”
ಹೀಗೆ ತನ್ನ ಸಾವು ನಿಶ್ಚಿತ ಎಂದು ತಿಳಿದಿದ್ದೂ ಮಾತು ಮಾತಿಗೂ ಎಲ್ಲರನ್ನೂ ನಗಿಸುತ್ತಲೇ 17 ವರ್ಷಗಳ ಕಾಲ ಬದುಕು ಸವೆಸಿದ. ಮದುವೆ ಬೇಡ ಎಂದು ಹೇಳಿದ್ದರೂ ಮದುವೆಯಾದ. ಕೆಲವು ವರ್ಷ ಸಂಸಾರವೂ ನಡೆಯಿತು. ಆದರೆ ವೈದ್ಯರ ಮಾತು ಸುಳ್ಳಾಗಲಿಲ್ಲ. ನಲವತ್ತು ತುಂಬಿದ ನಾಲ್ಕು ತಿಂಗಳಲ್ಲೇ ಇಲ್ಲವಾದ, 2001.
ಇದೇ ಜೀವನ ಇದುವೇ ಜೀವನ ಎನ್ನಬಹುದೇ ?
ಇರ್ಫಾನ್ ಖಾನ್ ಇಲ್ಲವಾದ ಸಂದರ್ಭದಲ್ಲಿ ಮತ್ತು ಅವರ ಅದ್ಭುತ ಬರಹ ಓದಿದ ನಂತರ ಏಕೋ ನೆನಪು ಜಾರಿತು. ಆನಂದ್ ನನಗೆ ಆಪ್ತವಾಗುವುದು ಈ ಕಾರಣಕ್ಕೆ. ಈಗ ಇರ್ಫಾನ್ ಹೆಚ್ಚು ಆಪ್ತವಾಗುವುದೂ ಇದೇ ಕಾರಣಕ್ಕೆ. ಸಾವು ಬದುಕಿನ ನಡುವೆ ಅಂತರ ಬಹಳ ಕಡಿಮೆ ಎನ್ನುವ ವಾಸ್ತವವನ್ನು ಅರಿಯಲು ಇಂತಹ ಕೆಲವು ದೃಷ್ಟಾಂತಗಳೂ ನೆರವಾಗುತ್ತವೆ. ಇರ್ಫಾನ್ ತಮ್ಮ ಹೆಜ್ಜೆ ಗುರುತುಗಳನ್ನು ಬಿಟ್ಟುಹೋಗಿದ್ದಾರೆ. ಪರದೆಯ ಮೇಲೆ ಮತ್ತು ನಮ್ಮ ನಡುವೆ ಅದ್ಭುತ ನೆನಪುಗಳನ್ನೂ ಬಿಟ್ಟುಹೋಗಿದ್ದಾರೆ. ಇಂತಹ ಜೀವಗಳ ಜೀವಂತಿಕೆ ಸಾವಿನಲ್ಲೂ ಕಾಣುತ್ತದೆಯಲ್ಲವೇ ? ಇದೇ ಜೀವನ ಇದುವೇ ಜೀವನ ಎನ್ನಬಹುದೇ ?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ
~ಡಾ. ಪುಷ್ಪಲತ ಸಿ ಭದ್ರಾವತಿ
ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು
ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.
ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.
ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.
ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.
ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ
ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


