Connect with us

ಬಹಿರಂಗ

ಕಾಶ್ಮೀರದ ವಿಶೇಷ ಸ್ಥಾನಮಾನದ ಅಂತ್ಯವೂ, ಅಮಿತ್ ಷಾ “ಅಭಿವೃದ್ಧಿ” ಅರ್ಥಶಾಸ್ತ್ರವೂ

Published

on

 

-ಪ್ರೊ. ಪ್ರಭಾತ್ ಪಟ್ನಾಯಕ್

ಅನು:ಕೆ.ಎಂ.ನಾಗರಾಜ್

  • ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ಮತ್ತು 35ಎ ವಿಧಿಗಳೇ ಆ ರಾಜ್ಯದಲ್ಲಿ ಅಭಿವೃದ್ಧಿಯಾಗದಿರಲು ಕಾರಣ ಎಂದು ಗೃಹಮಂತ್ರಿ ಅಮಿತ್ ಷಾ ಈ ವಿಧಿಗಳನ್ನು ಕೊನೆಗೊಳಿಸುವುದನ್ನು ಸಮರ್ಥಿಸಿಕೊಳ್ಳುತ್ತ ಹೇಳಿದ್ದಾರೆ. ಬಿಜೆಪಿಯ ಮುಖಂಡರುಗಳೆಲ್ಲರೂ ಈಗ ಜಪಿಸುತ್ತಿರುವ ಇದನ್ನು ದೇಶದ ಬಹಳಷ್ಟು ಮಂದಿ ನಂಬಿರುವಂತೆಯೂ ಕಾಣುತ್ತದೆ.
    ಆದರೆ ಇದು ನಿಜವಲ್ಲ, ಇದು ಕಾಶ್ಮೀರಿ ಯುವಜನರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿತಗೊಳಿಸುತ್ತದೆ. ಜತೆಗೆ, ಇದು, ದೇಶದಲ್ಲಿ ಪಾಳೇಗಾರಿ-ವಿರೋಧಿ ಭೂಸುಧಾರಣೆಗಳಿಗೆ ಮುನ್ನುಡಿ ಬರೆದ ರಾಜ್ಯಕ್ಕೆ ಒದಗಿರುವ ಈ ದುರ್ವಿಧಿಯನ್ನೇ ಅಮಿತ್‌ ಷಾ ಹೇಳುವ “ಅಭಿವೃದ್ಧಿ” ಎನ್ನುತ್ತಾರೆ ದೇಶದ ಹಿರಿಯ ಅರ್ಥಶಾಸ್ತ್ರಜ್ಞ ಪ್ರೊ. ಪ್ರಭಾತ್ ಪಟ್ನಾಯಕ್.

ಕಾಶ್ಮೀರದ ವಿಶೇಷ ಸ್ಥಾನಮಾನ ಕೊನೆಗೊಳಿಸುವ ನಡೆಯನ್ನು ಸಮರ್ಥಿಸಿಕೊಳ್ಳುವ ಸಂದರ್ಭದಲ್ಲಿ ರಾಜ್ಯ ಸಭೆಯಲ್ಲಿ ಗೃಹ ಮಂತ್ರಿ ಅಮಿತ್‌ ಷಾ ಕಾಶ್ಮೀರದ “ಅಭಿವೃದ್ಧಿ”ಯ ಪ್ರಶ್ನೆಯನ್ನು ತಮ್ಮ ಭಾಷಣದಲ್ಲಿ ತಂದರು. ಕಾಶ್ಮೀರವನ್ನು ಭಾರತದ ಉಳಿದ ಭಾಗಗಳೊಂದಿಗೆ ಗಾಢವಾಗಿ ಸಮಗ್ರಗೊಳಿಸುವುದರಿಂದ ಆ ಪ್ರದೇಶದಲ್ಲಿ ಹೂಡಿಕೆ ಹೆಚ್ಚುತ್ತದೆ ಎಂದು ವಾದಿಸಿದರು. ಕಾಶ್ಮೀರದ ಯುವಕರಿಗೆ ಹೆಚ್ಚು ಉದ್ಯೋಗಾವಕಾಶಗಳನ್ನು ಕಲ್ಪಿಸುವ ಭರವಸೆಯ ಮೂಲಕ ತಮ್ಮ ಸರ್ಕಾರದ ಕ್ರಮವನ್ನು ಬೆಂಬಲಿಸುವಂತೆ ಅಮಿತ್‌ ಷಾ ವಿಶೇಷವಾಗಿ ಕಾಶ್ಮೀರದ ಯುವಕರಿಗೆ ಮನವಿ ಮಾಡಿದರು.

ಕಳೆದ 45 ವರ್ಷಗಳಲ್ಲೇ ನಿರುದ್ಯೋಗದ ಪರಿಸ್ಥಿತಿ ಅತಿ ಹೆಚ್ಚು ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಭಾರತದ ಉಳಿದ ಭಾಗಗಳೊಂದಿಗೆ ಕಾಶ್ಮೀರವು ಗಾಢವಾಗಿ ಬೆಸೆದುಕೊಂಡರೆ ಅಲ್ಲಿ ಉದ್ಯೋಗಾವಕಾಶಗಳು ಹೆಚ್ಚುತ್ತವೆ ಎಂಬುದಾಗಿ ಹೂಡಿರುವ ದಾವೆಯು ಒಂದು ವಿಡಂಬನೆಯೇ ಸರಿ. ಆದರೂ, ಉದ್ಯೋಗಾವಕಾಶಗಳ ಬಗ್ಗೆ ಅಮಿತ್‌ ಷಾ ಅವರ ವಾದನ್ನು ಸೂಕ್ಷ್ಮವಾಗಿ ಪರಿಶೀಲಿಸೋಣ.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಇದೆಯೋ ಅಥವಾ ಇಲ್ಲವೋ ಎಂಬುದು ಒತ್ತಟ್ಟಿಗಿರಲಿ, ಸ್ಥಳಿಯವಾಗಿ ದೊರೆಯುವ ಕಚ್ಚಾ ಪದಾರ್ಥಗಳ ಸಂಸ್ಕರಣೆಗೆ ಸಂಬಂಧವಿಲ್ಲದ ಬೃಹತ್‌ ಕೈಗಾರಿಕೆಗಳು ಕಾಶ್ಮೀರಕ್ಕೆ ಹರಿದು ಬರುತ್ತವೆ ಎನ್ನುವುದೇ ಒಂದು ಅತ್ಯಂತ ಹಾಸ್ಯಾಸ್ಪದವಾದ ಸಂಗತಿ (ಅಮಿತ್‌ ಷಾರವರೇನೋ ಬೃಹತ್‌ ಕೈಗಾರಿಕೆಗಳು ಕಾಶ್ಮೀರಕ್ಕೆ ಹರಿದು ಬರಲಿವೆ ಎಂದಿದ್ದಾರೆ). ಒಂದು ಕಾರ್ಖಾನೆಯ ಸ್ಥಾಪನೆಗೆ ಸಂಬಂಧಿತ ಸಾಗಣೆ ವೆಚ್ಚಗಳು ಕಾಶ್ಮೀರದಲ್ಲಿ ವಿಪರೀತ ದುಬಾರಿಯಾಗುತ್ತವೆ. ಮತ್ತು, ಕಾಶ್ಮೀರದಲ್ಲಿ “ಹೊರಗಿನವರು” ಭೂಮಿ ಕೊಳ್ಳುವುದನ್ನು ನಿರ್ಬಂಧಿಸುವ 35A ವಿಧಿಯನ್ನು ರದ್ದು ಮಾಡಿರುವುದರಿಂದಾಗಿ ಭೂಮಿಯ ಬೆಲೆ ಏರುತ್ತದೆ – ಭವಿಷ್ಯದಲ್ಲಿ ಇದೊಂದು “ಸಕಾರಾತ್ಮಕ” ಬೆಳವಣಿಗೆಯಾಗಲಿದೆ ಎಂಬ ಅಂಶವನ್ನು ಸ್ವತಃ ಷಾ ಹೇಳಿದರು. ಹಾಗಾಗಿ, ಯಾರಾದರೂ ಮನಬಂದಂತೆ ಬೃಹತ್‌-ಕೈಗಾರಿಕೆಗಳನ್ನು ಕಾಶ್ಮೀರದಲ್ಲಿ ತೆರೆಯುತ್ತಾರೆ ಎಂಬುದು ಕೇವಲ ಒಂದು ಅಸಂಬದ್ಧವೇ. ಅಷ್ಟೇ ಏಕೆ, ಅದೇ ರೀತಿಯಲ್ಲಿ, ಯಾರಾದರೂ ಅಲ್ಲಿ ಮನಬಂದಂತೆ ಸಣ್ಣ-ಕೈಗಾರಿಕೆಗಳನ್ನು ತೆರೆಯುತ್ತಾರೆ ಎಂಬುದೂ ಅಷ್ಟೇ ಅಸಂಬದ್ಧ ಮಾತು.

ಆದ್ದರಿಂದ, ಕಾಶ್ಮೀರ ಕಣಿವೆಯಲ್ಲಿ ಉತ್ಕೃಷ್ಟವಾಗಿ ಬೆಳೆಯಬಹುದಾದ ಚಟುವಟಿಕೆಗಳೆಂದರೆ, ಅಲ್ಲಿ ಸ್ಥಳೀಯವಾಗಿ ದೊರೆಯುವ ಕಚ್ಚಾ ಪದಾರ್ಥಗಳನ್ನೇ ಬಳಸುವ ಚಟುವಟಿಕೆಗಳು ಮಾತ್ರ – ಅದು ಉಣ್ಣೆ ಇರಬಹುದು, ಅಥವಾ ಹಣ್ಣುಗಳೇ ಇರಬಹುದು, ಅಥವಾ ಮರಮಟ್ಟುಗಳೇ ಇರಬಹುದು, ಅಥವಾ ಮಾಂಸವೇ ಇರಬಹುದು. ಅಂತಹ ಚಟುವಟಿಕೆಗಳು ಕಾಶ್ಮೀರ ಕಣಿವೆಯಲ್ಲಿ ಈಗಾಗಲೇ ಸಧೃಢವಾಗಿ ನೆಲೆಗೊಂಡಿವೆ. ಈ ಚಟುವಟಿಕೆಗಳಿಗೆ ಈಗ ಬೇಕಿರುವುದು ಒಂದು ಒಳ್ಳೆಯ ಉತ್ತೇಜನವಷ್ಟೇ. ಅಂತಹ ಉತ್ತೇಜನ ದೊರೆಯಬೇಕಾದರೆ ರಾಜ್ಯದಲ್ಲಿ ಸಹಾನುಭೂತಿಯುಳ್ಳ ಒಂದು ಸರ್ಕಾರ ಇರಬೇಕಾಗುತ್ತದೆಯೇ ಹೊರತು, ವಿಶೇಷ ಸ್ಥಾನಮಾನ ಕೊನೆಗೊಳಿಸುವುದಲ್ಲ ಅಥವಾ “ಹೊರಗಿನವರು” ಭೂಮಿ ಕೊಳ್ಳುವುದರ ಮೇಲೆ ಇರುವ ನಿರ್ಬಂಧವನ್ನು ರದ್ದು ಮಾಡುವುದೂ ಅಲ್ಲ.
ನಿಜ, ಕಾಶ್ಮೀರವು ಉಳಿದ ಭಾರತದೊಂದಿಗೆ ಹೆಚ್ಚಿನ ಮಟ್ಟದಲ್ಲಿ ಮುಕ್ತವಾಗಿ ತೆರೆದುಕೊಂಡರೆ ಬಹುರಾಷ್ಟ್ರೀಯ ಕಂಪೆನಿಗಳೊ ಅಥವಾ ಭಾರತದ ದೊಡ್ಡ ದೊಡ್ಡ ಉದ್ದಿಮೆಗಳೋ ಅಲ್ಲಿ ಸ್ಥಾಪನೆಯಾಗಿ, ಇಂತಹ ಚಟುವಟಿಕೆಗಳನ್ನೇ ಅಭಿವೃದ್ಧಿಪಡಿಸುವ ಮೂಲಕ ಕಣಿವೆಯ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಬಹುದು ಎಂಬುದಾಗಿಯೂ ಯೋಚಿಸಬಹುದು. ಆದರೆ, ದೊಡ್ಡ ಬಂಡವಾಳವು, ಅದು ಭಾರತದ್ದೇ ಆಗಿರಲಿ ಅಥವಾ ವಿದೇಶದ್ದೇ ಆಗಿರಲಿ, ಸ್ಥಳೀಯ ಉತ್ಪಾದಕರು ತೊಡಗಿರುವ ಚಟುವಟಿಕೆಗಳಲ್ಲೇ ಕಾಲಿಟ್ಟಾಗ ಉದ್ಯೋಗಗಳು ಸ್ವಲ್ಪವೂ ಹೆಚ್ಚುವುದಿಲ್ಲ. ಬದಲಿಗೆ, ಸ್ಥಳೀಯ ಉತ್ಪಾದಕರ ಸ್ಥಾನವನ್ನು ಆಕ್ರಮಿಸುವುದರಿಂದ ಉದ್ಯೋಗಗಳು ಕುಗ್ಗುತ್ತವೆ. ಕಾಲಕ್ರಮದಲ್ಲಿ ಇಂತಹ ಚಟುವಟಿಕೆಗಳನ್ನು ವೃದ್ಧಿಸುವ ಅವಕಾಶಗಳಿದ್ದರೆ, ಅಂತಹ ಅವಕಾಶಗಳನ್ನು ಸ್ಥಳೀಯ ಉತ್ಪಾದಕರೇ ಬಳಸಿಕೊಳ್ಳುವಂತೆ ರಾಜ್ಯ ಸರ್ಕಾರವು ಅವರಿಗೆ ಸಹಾಯ ಮಾಡಬಹುದು. ಇಂತಹ ಸ್ಥಳೀಯ ಉತ್ಪನ್ನಗಳಿಗೆ ದೊಡ್ಡ ಉದ್ದಿಮೆಗಳು ಬಂದರೆ ಕ್ರಮೇಣ ಉದ್ಯೋಗಾವಕಾಶಗಳು ಕಡಿಮೆಯಾಗುತ್ತವೆಯೇ ಹೊರತು ಖಂಡಿತವಾಗಿಯೂ ಹೆಚ್ಚುವುದಿಲ್ಲ.

ಆದರೆ, ಅಮಿತ್‌ ಷಾ ಅವರ ಪ್ರಕಾರ ಕಾಶ್ಮೀರಿಗಳ ನಿಜವಾದ “ನಿರೀಕ್ಷೆ” ಹೊರಗಿನವರು ಭೂಮಿ ಕೊಳ್ಳಲು ಕಾಶ್ಮೀರ ಕಣಿವೆಯಲ್ಲಿ ಪ್ರವೇಶಿಸುವುದರಲ್ಲೇ ಅಡಗಿದೆ. ಹಿಮಾಚಲ ಪ್ರದೇಶ ಮತ್ತು ಇತರ ಗಡಿ ಭಾಗದ ಬೆಟ್ಟ-ಗುಡ್ಡಗಳ ರಾಜ್ಯಗಳಲ್ಲಿ ಹೊರಗಿನವರು ಭೂಮಿ ಕೊಳ್ಳುವುದರ ಮೇಲೆ ನಿರ್ಬಂಧ ಇರುವಾಗ, “ಅಭಿವೃದ್ಧಿ”ಯ ಹೆಸರಿನಲ್ಲಿ ಕಾಶ್ಮೀರ ಕಣಿವೆಯಲ್ಲಿ ಮಾತ್ರ ಭೂಮಿ ಕೊಳ್ಳುವುದರ ಮೇಲೆ ಇರುವ ನಿರ್ಬಂಧವನ್ನು ತೆಗೆಯಬೇಕು ಎನ್ನುವುದು ವಿಚಿತ್ರವೇ ಸರಿ. ಕೇವಲ ಭೂಮಿ ವ್ಯವಹಾರಗಳ ಉಬ್ಬರದಿಂದ ಕಾಶ್ಮೀರ ಕಣಿವೆಯ ಅಭಿವೃದ್ಧಿಯಾಗುತ್ತದೆಯೇ?

ಒಬ್ಬ ವ್ಯಕ್ತಿಯು ಭೂಮಿ ಕೊಳ್ಳುವಾಗ, ತಾನು ಹೊಂದಿರುವ ಯಾವುದೊ ಒಂದು ಆಸ್ತಿಯನ್ನು ಇನ್ನೊಂದು ಆಸ್ತಿ (ಭೂಮಿ) ಹೊಂದುವತ್ತ ಚಲಿಸುತ್ತಾನೆ. ಭೂಮಿ ಮಾರುವವನ ಪರಿಸ್ಥಿತಿಯೂ ಅದೇ ರೀತಿಯಲ್ಲಿಯೇ ಇರುತ್ತದೆ. ಹಾಗಾದರೆ, ಆ ಯಾವುದೊ ಒಂದು ಎಂದು ಹೇಳುವ ಆಸ್ತಿ ಯಾವುದು? ಕಾಶ್ಮೀರ ಕಣಿವೆಯಲ್ಲಿ ಭೂಮಿ ಕೊಳ್ಳುವ ಹೊರಗಿನವನು ತಾನು ಹೊಂದಿರುವ ಉತ್ಪಾದಕ ಆಸ್ತಿಯಿಂದ ಭೂಮಿ ಹೊಂದುವತ್ತ ಚಲಿಸಿದರೆ, ಉಳಿದ ಭಾರತಕ್ಕೆ ಆ ವ್ಯವಹಾರವು ಒಂದು ಹಿಮ್ಮುಖ ನಡೆಯಾಗುತ್ತದೆ. ಆ ವ್ಯವಹಾರವು ಆ ರೀತಿಯದೇ ಅಲ್ಲ ಎಂದು ಭಾವಿಸಿ, ಅಮಿತ್‌ ಷಾ ಅವರ ಕಲ್ಪನೆಗೆ ಹೊಂದುವಂತಹ ಒಂದು ಉದಾಹರಣೆ ತೆಗೆದುಕೊಳ್ಳೋಣ: ಭೂಮಿ ಕೊಳ್ಳುವವನು ತಾನು ಹೊಂದಿರುವ ನಗದು ಹಣದಿಂದ ಭೂಮಿ-ಆಸ್ತಿಯತ್ತ ಚಲಿಸುತ್ತಾನೆ. ಇದು ಉಳಿದ ಭಾರತದಲ್ಲಿ ಆಗುವ ಹೂಡಿಕೆಯಲ್ಲಿ ಕಡಿತವಾಗುವುದಿಲ್ಲ ಎಂದು ಮೊದಲ ನೋಟದಲ್ಲಿ ತೋರುತ್ತದೆ. ಕಾಶ್ಮೀರ ಕಣಿವೆಯಲ್ಲಿ ಭೂಮಿ ಕೊಳ್ಳುವವನು ಬ್ಯಾಂಕಿಂಗ್‌ ವ್ಯವಸ್ಥೆಯಿಂದ ಸಾಲ ಪಡೆಯುತ್ತಾನೆ, ಆತನಿಗೆ ಸಾಲ ಒದಗಿಸುವಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ಯಾವುದೇ ಅಡಚಣೆಯಿಲ್ಲ ಎಂಬ ಒಂದು ಉದಾಹರಣೆಯನ್ನೇ ತೆಗೆದುಕೊಳ್ಳೋಣ.
ಈಗ ಒಂದು ಪ್ರಶ್ನೆ: ಭೂಮಿ ಮಾರಿದವರು ತಮಗೆ ಬಂದ ಹಣವನ್ನು ಏನು ಮಾಡುತ್ತಾರೆ? ಈಗ ತಾನೇ ಚರ್ಚಿಸಿರುವ ಕಾರಣಗಳಿಂದಾಗಿ, ಕಾಶ್ಮೀರ ಕಣಿವೆಯಲ್ಲಿ ಭೂಮಿ ಮಾರಿದವರು, ಕಣಿವೆಯಲ್ಲೇ ಹೂಡಿಕೆ ಮಾಡುವ ಸಂಭವ ಕಡಿಮೆಯೇ, ಬಹುಷಃ ಸ್ಥಳೀಯ ಉತ್ಪನ್ನಗಳ ಉತ್ಪಾದನೆಯನ್ನು ಹೆಚ್ಚಿಸುವುದಕ್ಕೆ ಮಾಡುವ ಹೂಡಿಕೆಯನ್ನು ಹೊರತುಪಡಿಸಿದರೆ. ಆದರೆ, ಸ್ಥಳೀಯ ಸರಕುಗಳ ಉತ್ಪಾದನೆ ಹೆಚ್ಚಿಸುವ ಉದ್ದೇಶಕ್ಕಾಗಿ ಹೂಡಿಕೆ ಮಾಡಲು ಹಣಕಾಸಿನ ಕೊರತೆಯಂತಹ ಯಾವುದೇ ತೊಂದರೆಯಿತ್ತು ಎಂಬುದನ್ನು ನಂಬಲು ಕಾರಣವೇ ಇಲ್ಲ. ಸ್ಥಳೀಯ ಸರಕುಗಳ ಉತ್ಪಾದನೆಯನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸುವಂತಹ ಅವಕಾಶ ಇರಬಹುದು. ಅದಕ್ಕೆ ರಾಜ್ಯ ಸರ್ಕಾರದ ಉತ್ಸಾಹಪೂರ್ಣ ಭಾಗವಹಿಸುವಿಕೆ ಇರಬೇಕಾಗುತ್ತದೆ. ಆದ್ದರಿಂದ, ಭೂಮಿ ಮಾರಿ ಕೈಯಲ್ಲಿ ಹಣ ಇಟ್ಟುಕೊಳ್ಳುವುದೇ ಉತ್ಪಾದನೆ ಹೆಚ್ಚಿಸುವತ್ತ ಕೊಂಡೊಯ್ಯುವುದಿಲ್ಲ. ಉತ್ಪಾದನೆ ಹೆಚ್ಚಿಸುವಂತಹ ಅವಕಾಶ ಇದ್ದಿದ್ದರೆ ಭೂಮಿಯ ವ್ಯಾಪಾರ ಇಲ್ಲದಿದ್ದರೂ ಹೂಡಿಕೆಯಾಗುತ್ತಿತ್ತು. ಹಾಗಾಗಿ, ಭೂಮಿ ಮಾರಿದ ಹಣವನ್ನು, ಬಹುತೇಕವಾಗಿ, ಬ್ಯಾಂಕ್‌ನಲ್ಲಿ ಠೇವಣಿ ಇಡಬೇಕಾಗುತ್ತದೆ.

ಇಂತಹ ಹಣ ಬ್ಯಾಂಕ್‌ನಲ್ಲಿ ಠೇವಣಿಯಾದಾಗ ಅದು ಸಾಮಾನ್ಯವಾಗಿ ಸ್ಥಳೀಯವಾಗಿ ಸಾಲ ಕೊಡಲು ಬಳಕೆಯಾಗುವುದಿಲ್ಲ ಎಂಬುದು ಒಂದು ದಿನ ನಿತ್ಯದ ಸತ್ಯ. ಒಂದೋ ಅದು ಕಾಶ್ಮೀರದ ಹೊರಗೆ ಸಾಲ ಕೊಡಲು ಬಳಕೆಯಾಗುತ್ತದೆ ಇಲ್ಲವೇ, ಹೆಚ್ಚೆಂದರೆ, ಸ್ಥಳಿಯ ಬ್ಯಾಂಕ್‌ಗಳಲ್ಲಿ ನಿಷ್ಕ್ರಿಯವಾಗಿ ಬಿದ್ದಿರುತ್ತದೆ. ಆದ್ದರಿಂದ, ಇಲ್ಲಿ ಆಗಬಹುದಾದದ್ದು ಏನೆಂದರೆ, ಪುಡಿಗಾಸಿಗಾಗಿ ಅತ್ತ ಹೊರಗಿನವರಿಗೆ ಕಣಿವೆ ಭೂಮಿ ಮಾರಿ ಇದ್ದದ್ದನ್ನು ಕಳೆದುಕೊಳ್ಳುವ ಮತ್ತು ಆ ಪುಡಿಗಾಸು ಇತ್ತ ಕಣಿವೆಯಿಂದ ಸೋರಿ ಹೋಗುವ ಒಂದೇ ಒಂದು ಬದಲಾವಣೆ. ಹಾಗಾಗಿ, ಇಂತಹ ಬದಲಾವಣೆಯಿಂದಾಗಿ ಅತ್ತ ಕಿಂಚಿತ್‌ “ಅಭಿವೃದ್ಧಿ”ಯೂ ಇಲ್ಲ, ಇತ್ತ ಉದ್ಯೋಗಗಳೂ ಹೆಚ್ಚುವುದಿಲ್ಲ.
ಇನ್ನೊಂದು ಕಡೆಯಲ್ಲಿ, ಎಷ್ಟು ಭೂಮಿ ಕೈ ಬದಲಾಯಿಸಿತೊ ಅದರಲ್ಲಿ, ಈ ಬದಲಾವಣೆಗೆ ಮೊದಲು ನಡೆಯುತ್ತಿದ್ದ ಅಷ್ಟೊ ಇಷ್ಟೊ ಚಟುವಟಿಕೆಗಳು ಕೈ ಬದಲಾವಣೆಯ ಕಾರಣದಿಂದಾಗಿ ನಿಂತು ಹೋಗುತ್ತವೆ. ಏಕೆಂದರೆ, ಹೊರಗಿನ ಖರೀದಿದಾರರು ಭೂಮಿಯ ಬೆಲೆ ಏರಿದಾಗ ಮಾರುವ, ಇಲ್ಲವೇ, ಕಣಿವೆಯ ಆ ಭೂಮಿಲ್ಲಿ ತಮಗೊಂದು ಬೇಸಿಗೆ ವಿಶ್ರಾಂತಿ ಧಾಮ ನಿರ್ಮಿಸಿಕೊಳ್ಳುವ ಹವಣಿಕೆಯಲ್ಲಿರುತ್ತಾರೆ.

ಹೀಗೆ ಯಾವ ರೀತಿಯಲ್ಲಿ ನೋಡಿದರೂ, ಕಾಶ್ಮೀರದ ವಿಶೇಷ ಸ್ಥಾನಮಾನ ಕೊನೆಗೊಳಿಸುವ ಮತ್ತು ಹೊರಗಿನವರು ಭೂಮಿ ಕೊಳ್ಳುವುದರ ಮೇಲೆ ಇದ್ದ ನಿರ್ಬಂಧವನ್ನು ರದ್ದು ಮಾಡುವ ಕ್ರಮಗಳಿದಿಂದಾಗಿ ಅಲ್ಲಿ ಉದ್ಯೋಗಾವಕಾಶಗಳು ಕಿಂಚಿತ್ತೂ ಹೆಚ್ಚುವುದಿಲ್ಲ. ಬದಲಾಗಿ, ಕಣಿವೆಯ ಭೂಮಿಯು ದಿಲ್ಲಿಯ ಅಥವಾ ಮುಂಬೈನ ಶ್ರೀಮಂತರ ಕೈಗೆ ಹಸ್ತಾಂತರವಾಗುತ್ತಿದ್ದಂತೆಯೇ ಕಣಿವೆಯಲ್ಲಿ ಉದ್ಯೋಗಾವಕಾಶಗಳು ಬಹುತೇಕ ಕುಸಿಯುತ್ತವೆ.

ವಿಶೇಷ ಸ್ಥಾನಮಾನ ರದ್ದು ಮಾಡುವ ಕ್ರಮದಿಂದ ಕಾಶ್ಮೀರದ ಅಭಿವೃದ್ಧಿ ನಿಜಕ್ಕೂ ಯಶಸ್ವಿಯಾಗುವ ಸಂಭವ ಇತ್ತು ಎನ್ನುವುದಾದರೆ, ಕೇಂದ್ರ ಸರ್ಕಾರವು ವಿಶೇಷ ಸ್ಥಾನಮಾನ ರದ್ದು ಮಾಡುವ ಮೊದಲೇ ಇಬ್ಬರು ಮಾಜಿ ಮುಖ್ಯಮಂತ್ರಿಗಳೂ ಸೇರಿದಂತೆ ರಾಜ್ಯದ ರಾಜಕೀಯ ನಾಯಕರನ್ನು ಬಂಧಿಸುವುದು ಅಗತ್ಯವೆಂದು ಭಾವಿಸುತ್ತಿರಲಿಲ್ಲ. ಹಾಗಾಗಿ, ವಿಶೇಷ ಸ್ಥಾನಮಾನದ ರದ್ದತಿಯನ್ನು ಅನಿವಾರ್ಯವಾಗಿ ಹಿಂಬಾಲಿಸುವ ಹಿಂಸೆಯಿಂದಾಗಿ ಅಲ್ಲಿ ಜನರಿಗೆ ಅನ್ನ ಒದಗಿಸುವ ಪ್ರಧಾನ ಚಟುವಟಿಕೆಯಾಗಿದ್ದ ಪ್ರವಾಸೋದ್ಯಮವೂ ಬಹಳ ದಿನಗಳವರೆಗೆ ಕುಂಠಿತಗೊಳ್ಳುವುದರಿಂದ ಕಾಶ್ಮೀರಿ ಯುವಕರಿಗೆ ಉದ್ಯೋಗ ಲಭಿಸುವುದು ಇನ್ನೂ ಹೆಚ್ಚು ಕಷ್ಟಕರವಾಗುತ್ತದೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಜನರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಈಗ “ಅಭಿವೃದ್ಧಿ”ಯ ಘೋಷಣೆ ಮೊಳಗುತ್ತಿದೆ. ಹಾಗಾದರೆ, ಕೇಂದ್ರ ಸರ್ಕಾರವು ಈಗ ಏನನ್ನು ಮಾಡಿದೆಯೋ ಅದನ್ನು ಮಾಡಿರುವುದಾದರೂ ಏಕೆ? ಸಾಮಾನ್ಯವಾದ ಒಂದು ಉತ್ತರವೆಂದರೆ, ಆದು, ಹಿಂದುತ್ವವಾದಿಗಳ ಬಹಳ ವರ್ಷಗಳ ಬೇಡಿಕೆ. ಅವರ ಕಣ್ಣು ದೇಶದ ಏಕ ಮಾತ್ರ ಮುಸ್ಲಿಂ ಬಾಹುಳ್ಯದ ರಾಜ್ಯದ ಜನ ಸಂಖ್ಯೆಯ ಸಂಯೋಜನೆಯನ್ನು ಇಸ್ರೇಲ್‌ ಪ್ಯಾಲೆಸ್ತೀನಿಯರ ಜಮೀನು ಕಬಳಿಸುತ್ತಿರುವ ರೀತಿಯಲ್ಲಿ ಬದಲಿಸುವತ್ತ ನೆಟ್ಟಿದೆ.

ಇದು ನಿಜವಿದೆಯಾದರೂ ಸಹ, ಮತ್ತೊಂದು ಸಂಭವನೀಯ ಉದ್ದೇಶವನ್ನು ನಾವು ಕಡೆಗಣಿಸುವಂತಿಲ್ಲ. ವಾಸ್ತವವಾಗಿ, ಈ ಸರ್ಕಾರವು ಹಿಂದುತ್ವ-ಕಾರ್ಪೋರೇಟ್‌ಗಳ ಒಂದು ಮೈತ್ರಿ ಕೂಟವೇ. ಹಾಗಾಗಿ, ಅದು ಕೈಗೊಳ್ಳುವ ಎಲ್ಲ ಕಾರ್ಯಗಳೂ ಕಾರ್ಪೋರೇಟ್‌ಗಳ ಹಿತಾಸಕ್ತಿಯನ್ನು ಈಡೇರಿಸುವ ಉದ್ದೇಶದಿಂದ ಕೂಡಿವೆ. ಕಾಶ್ಮೀರ ಕಣಿವೆಯ ಬಾಗಿಲನ್ನು ಕಾರ್ಪೋರೇಟ್‌ ಆಶ್ರಯದಾತರಿಗೆ ತೆರೆದಿರುವುದು ಅಲ್ಲಿ ಉತ್ಪಾದನೆ ಸಂಬಂಧಿತ ಆರ್ಥಿಕ ಚಟುವಟಿಕೆ ಹೆಚ್ಚಿಸುವುದಕ್ಕಲ್ಲ, ಬದಲಿಗೆ ರಿಯಲ್ ಎಸ್ಟೇಟ್ ಬೆಳೆಸಲಿಕ್ಕೆ ಅಥವಾ ಕೇವಲ ಭೂಮಿಯ ಬೆಲೆಗಳಲ್ಲಿ ಜೂಜುಗಾರಿಕೆಯೂ ಒಂದು ಹೆಚ್ಚುವರಿ ಉತ್ತೇಜನೆಯಾಗಿದೆ. ಇಂತಹ ರಿಯಲ್ ಎಸ್ಟೇಟ್ ಚಟುವಟಿಕೆಗಳು ಉದ್ಯೋಗಾವಕಾಶಗಳ ಮಟ್ಟವನ್ನೇನೂ ಹೆಚ್ಚಿಸುವುದಿಲ್ಲ. ಮಾರುವ ಮುನ್ನ ಆ ಭೂಮಿ ಉತ್ಪಾದಕ ಚಟುವಟಿಕೆಗಳಿಗೆ ಬಳಕೆಯಾಗುತ್ತಿದ್ದರಂತೂ ಅದು ಉದ್ಯೋಗಾವಕಾಶವನ್ನು ಕಡಿತ ಮಾಡುತ್ತದೆ.

ಈ ರೀತಿಯಾಗಿ, ಕಣಿವೆಯ ಬಾಗಿಲನ್ನು ಕೆಲವು ಜೂಜುಕೋರ ಭೂಮಿ ವ್ಯವಹಾರಿಗಳಿಗೆ ಮತ್ತು ರಿಯಲ್ ಎಸ್ಟೇಟ್ ಮಂದಿಗೆ ತೆರೆಯುವುದರಿಂದ, ಅದರಿಂದಾಗುವ ಪರಿಸರ ಮಾಲಿನ್ಯವನ್ನು ವಿವರಿಸುವ ಅಗತ್ಯವಿಲ್ಲ, ಜತೆಗೆ, ಈ ಮಂದಿ ಕಾಶ್ಮೀರದ ಮುಖವನ್ನು ಅಂದ, ಚೆಂದದಿಂದಾಗಿಯೇ ಶಾಶ್ವತವಾಗಿ ವಿರೂಪಗೊಳಿಸುತ್ತಾರೆ. ಇದರಿಂದ ಕೆಲವು ಉತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ಕಾಶ್ಮೀರದ ಅರ್ಥವ್ಯವಸ್ಥೆಯು ಜೂಜುಕೋರರ ಮತ್ತು ಭೂಗಳ್ಳ ಕದೀಮರ ಬೇಟೆಯ ತಾಣವಾಗಿ ಪರಿವರ್ತನೆಗೊಂಡು, ಇಂತಹ ಧಂಧೆಗಳಿಗೆ ಅಂಟಿಕೊಂಡಿರುವ ಕೊಲೆ ಸುಲಿಗೆ ಮುಂತಾದ ಅಪರಾಧಗಳಲ್ಲಿ ತೀವ್ರ ಉಬ್ಬರವೂ ಅನಿವಾರ್ಯವಾಗಿ ಬರುತ್ತದೆ. ಈಗಾಗಲೇ ತಾಳಲಾರದ ಮಟ್ಟದಲ್ಲಿರುವ ಭಯೋತ್ಪಾದಕರ ಹಾವಳಿ ಮತ್ತಷ್ಟು ಹೆಚ್ಚುವುದರೊಂದಿಗೆ, ಅದಕ್ಕೆ ಈ ರಿಯಲ್ ಎಸ್ಟೇಟ್ ಸಂಬಂಧಿತ ಅಪರಾಧಗಳು ತುಪ್ಪ ಸುರಿಯುತ್ತವೆ. ನಿಜ ಹೇಳಬೇಕೆಂದರೆ, ಈ ಎರಡೂ ರೀತಿಯ ಹಿಂಸಾಚಾರಗಳು ಒಂದಕ್ಕೊಂದು ಪೂರಕವಾಗುತ್ತವೆ, ಬೇರೆ ಸಂದರ್ಭಗಳಲ್ಲಿ ಮಾದಕ ಪದಾರ್ಥಗಳ ವ್ಯವಹಾರಗಳು ಮತ್ತು ಭಯೋತ್ಪಾದನೆಗಳು ಒಂದಕ್ಕೊಂದು ಪೂರಕವಾಗಿರುವ ರೀತಿಯಲ್ಲಿ ಇದು, ದೇಶದಲ್ಲಿ ಪಾಳೇಗಾರಿ-ವಿರೋಧಿ ಭೂಸುಧಾರಣೆಗಳಿಗೆ ಮುನ್ನುಡಿ ಬರೆದ ರಾಜ್ಯಕ್ಕೆ ಒದಗಿರುವ ಒಂದು ದುರ್ವಿಧಿ. ಆದರೆ ಅಮಿತ್‌ ಷಾ ಖಂಡಿತವಾಗಿಯೂ ಈ ದುರ್ವಿಧಿಯನ್ನೇ “ಅಭಿವೃದ್ಧಿ” ಎನ್ನುತ್ತಾರೆ!

(ಜನಶಕ್ತಿಯ ಈ ವಾರದ ಸಂಚಿಕೆಯಲ್ಲಿ ಪ್ರಕಟವಾಗಲಿರುವ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

Published

on

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್‌ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಲ್ಲಿ ಸೇರಿದ ಎಸ್‌ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು  ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.

ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್‌ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್‌ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್‌ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending