ದಿನದ ಸುದ್ದಿ
ಹನಿಗವಿತೆಗಳ ಸರದಾರ – ಜರಗನಹಳ್ಳಿ ಶಿವಶಂಕರ್
- ಕೆ.ರಾಘವೇಂದ್ರ ನಾಯರಿ, ದಾವಣಗೆರೆ
ನಾಡಿನ ಹಿರಿಯ ಸಾಹಿತಿಗಳಾದ ಜರಗನಹಳ್ಳಿ ಶಿವಶಂಕರ್ ಅವರ ನಿಧನ ಸಂದರ್ಭದಲ್ಲಿ ಅವರಿಗೆ ಅಕ್ಷರ ನಮನ
ಕನ್ನಡದ ನಾಡಿನ ಹಿರಿಯ ಕವಿ, ಚಿಂತಕ, ಖ್ಯಾತ ಹನಿಗವನ ರಚನೆಗಾರ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜರಗನಹಳ್ಳಿ ಶಿವಶಂಕರ್ 05-05-2021 ರಂದು ನಿಧನರಾಗಿರುವುದು ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕೊರೋನಾ ಇನ್ನೊಬ್ಬ ಪ್ರತಿಭಾವಂತ ಸಾಹಿತಿಯ ಬಲಿ ಪಡೆದಿರುವುದು ಅತ್ಯಂತ ವಿಷಾದನೀಯ.
ನಾಡು ಕಂಡ ಅಪ್ರತಿಮ ಬಹುಮುಖ ಪ್ರತಿಭೆಗೆ ನನ್ನ ಭಾವಪೂರ್ಣ ಶ್ರದ್ಧಾಂಜಲಿ. ಅವರ ಖ್ಯಾತ ಹನಿಗವನವಾದ “ಬಾಳಿಕೆ” ಯಲ್ಲಿ ಅವರು ಬರೆದಿರುವಂತೆ…
ಹತ್ತಾರು ವರುಷ
ನೆರಳಾಗಿ ನಿಂತ ಮರ
ತೊಲೆಯಾಗಿ ಉಳಿಯಿತು
ನೂರಾರು ವರುಷ
ನೂರು ವರುಷ
ಆಳಿದ ಅರಸ
ಹೆಣವಾಗಿ ಉಳಿಯಲಿಲ್ಲ
ಮೂರು ದಿವಸ... !
ಎಂಥಹ ಅದ್ಭುತವಾದ ಹನಿಗವನವಿದು. ಮನುಷ್ಯನ ಜೀವನದ ಸಾರ್ಥಕ್ಯದ ಕುರಿತಾಗಿ ನೇರವಾಗಿ ಬಾಣ ಹೊಡೆದು ಸಮಾಜವನ್ನು ಚಿಂತನೆಗೆ ದೂಡಿದ ಕವನವಿದು. ಮನುಷ್ಯನ ಕಳೇಬರ ಮೂರು ದಿವಸವೂ ಉಳಿಯುವುದಿಲ್ಲ. ಆದರೆ ಮರಗಿಡಗಳು ತಮ್ಮ ಅಳಿವಿನ ನಂತರವೂ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವ ಮೂಲಕ ಮಾನವ ಸಂಕುಲಕ್ಕೆ ಸಹಕಾರಿಯಾಗಿರುತ್ತವೆ.
ಹಾಗೆಯೇ ಮನುಷ್ಯನು ತನ್ನ ಜೀವಿತಾವಧಿಯಲ್ಲಿ ಮಾಡಿರುವ ಸಾಧನೆ, ಒಳ್ಳೆಯ ಕೆಲಸಗಳೇ ಆತನ ಹೆಸರನ್ನು ಅಜರಾಮರವಾಗುವಂತೆ ಮಾಡಬಲ್ಲದು ಎನ್ನುವುದು ಈ ಕವಿತೆಯ ಮೂಲಕವಾಗಿ ಕವಿಯ ಆಶಯವಾಗಿದೆ. ಈ ನಿಟ್ಟಿನಲ್ಲಿ ಜರಗನಹಳ್ಳಿಯವರು ತನ್ನದೇ ಹನಿಗವನದ ಆಶಯಕ್ಕೆ ತಕ್ಕಂತೆಯೇ ತನ್ನ ಜೀವನವನ್ನು ರೂಪಿಸಿಕೊಂಡವರು. ಅವರು ಬರೆದಿರುವ ಅಸಂಖ್ಯಾತ ಹನಿಗವನಗಳು, ಕವಿತೆಗಳು, ಬರಹಗಳು ಮತ್ತು ಅವರ ಕನ್ನಡದ ಸೇವೆ ಅವರ ಹೆಸರನ್ನು ಅಜರಾಮರವಾಗಿ ಜನರ ಮಧ್ಯೆ ಇಡುವುದರಲ್ಲಿ ಸಂಶಯವಿಲ್ಲ.
ಖ್ಯಾತ ಹನಿಗವನ ರಚನೆಕಾರರಾಗಿದ್ದ ಅವರ ಹನಿಗವನಗಳು ಅತ್ಯಂತ ಜನಪ್ರಿಯವಾಗಿದ್ದವು. ನಾನೂ ಸಹ ಎಷ್ಟೋ ಸಮಾರಂಭಗಳಲ್ಲಿ ಭಾಷಣ ಮಾಡುವಾಗ, ನಿರೂಪಣೆ ಮಾಡುವ ಸಂದರ್ಭಗಳಲ್ಲಿ ಅವರ ಹೆಸರನ್ನು ಮತ್ತು ಅವರ ಹನಿಗವನಗಳನ್ನು ಯಾವಾಗಲೂ ಬಳಸಿಕೊಳ್ಳುತ್ತಿದ್ದೆ. ಅಷ್ಟರ ಮಟ್ಟಿಗೆ ಅವುಗಳು ವೈಯಕ್ತಿಕವಾಗಿ ನನ್ನನ್ನು ತುಂಬಾ ಆಕರ್ಷಿಸಿದ್ದವು ಎಂದರೂ ತಪ್ಪಿಲ್ಲ.
ಅವರ ಹನಿಗವನಗಳಲ್ಲಿನ ವ್ಯಂಗ್ಯ, ವಿಡಂಬನೆ, ವಿನೋದ, ದಿಟ್ಟತನ, ವೈಚಾರಿಕತೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನೂ ಸ್ಪಷ್ಟವಾಗಿ ಪ್ರತಿಬಿಂಬಿಸುತ್ತಿದ್ದವು. ಅವರನ್ನು ಅವರ ಹನಿಗವನಗಳ ಮೂಲಕ ನನಗೆ ಪರಿಚಯ ಮಾಡಿದವರು ಕೆನರಾಬ್ಯಾಂಕಿನ ವಿಶ್ರಾಂತ ವಿಭಾಗೀಯ ಪ್ರಬಂಧಕರು ಹಾಗೂ ಹಿರಿಯ ಸಾಹಿತಿಗಳಾದ ಎನ್.ಟಿ.ಎರ್ರಿಸ್ವಾಮಿಯವರು.
ಕೆನರಾ ಬ್ಯಾಂಕಿನಲ್ಲಿ 28 ವರ್ಷಗಳ ಕಾಲ ಅಧಿಕಾರಿಯಾಗಿ ಸೇವೆ ಮಾಡಿದ್ದ ಜರಗನಗಳ್ಳಿ ಶಿವಶಂಕರ್ ಅವರು ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ (2004-2008 ರ ಅವಧಿಯಲ್ಲಿ) ಕಾರ್ಯ ನಿರ್ವಹಿಸಿ ಕನ್ನಡ ನಾಡು ನುಡಿಗಳ ಕೈಂಕರ್ಯವನ್ನು ಪ್ರಾಮಾಣಿಕವಾಗಿ ಮತ್ತು ಬಲು ಪರಿಣಾಮಾಕಾರಿಯಾಗಿ ನಿರ್ವಹಿಸಿದ್ದರು.
ಕನ್ನಡಪರ ಹೋರಾಟಗಳಲ್ಲಿಯೂ ಸದಾ ಮುಂಚೂಣಿಯಲ್ಲಿದ್ದವರು ಜರಗನಹಳ್ಳಿ ಶಿವಶಂಕರ್ ಅವರು. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, ಕಾಸರಗೋಡಿನಲ್ಲಿ ನಡೆದ ಅಖಿಲ ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ, ಕೋಲಾರ ಜಿಲ್ಲಾ ದ್ವಿತೀಯ ಚುಟುಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ, ಆಕಾಶವಾಣಿ, ದೂರದರ್ಶನ, ವಿಶ್ವವಿದ್ಯಾನಿಲಯ, ಅಕಾಡೆಮಿ, ದಸರಾ ಕವಿಗೋಷ್ಠಿಗಳ ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಅಧ್ಯಕ್ಷ ಹಾಗೂ ಪ್ರತಿನಿಧಿಯಾಗಿ ಭಾಗಿಯಾಗಿ ಕಾರ್ಯನಿರ್ವಹಿಸಿದ ಅನುಭವ ಅವರದು.
ಕನ್ನಡದ ಹಲವಾರು ಪ್ರಮುಖ ದಿನಪತ್ರಿಕೆಗಳಲ್ಲಿ ಇವರ ಹನಿಗವಿತೆಗಳು, ಲೇಖನಗಳು ಸುಮಾರು 4 ದಶಕಗಳ ಕಾಲ ಪ್ರಕಟಗೊಂಡಿವೆ. ಅವರ ಕೃತಿಗಳಾದ “ಶುಭಾಂಗಿ” (ಕವಿತೆ – 1985 ರಲ್ಲಿ), “ಜೊತೆಯಾದವರು” (ಕವನ ವಿಮರ್ಶೆ – 1987 ರಲ್ಲಿ), “ಬುಗ್ಗೆ” (ಹನಿಗವಿತೆ – 1991 ರಲ್ಲಿ), “ಮಳೆ” (ಹನಿಗವಿತೆ – 2000 ರಲ್ಲಿ), “ಎರೆಹುಳು” (ಕವಿತೆ – 2001 ರಲ್ಲಿ), “ಆಲಿಕಲ್ಲು” (ಹನಿಗವಿತೆ), “ಮರಗಳು” (ಹನಿಗವಿತೆ – 1998 ರಲ್ಲಿ), “ಝರಿ” (ಹನಿಗವಿತೆ – 2002 ರಲ್ಲಿ), “ಭಾವ-ಬದುಕು” (ಅಂಕಣ ಬರಹಗಳು – ತರಂಗ), “ದೇವರ ನೆರಳು” (ದೇವರ ಕವಿತೆಗಳು – 2004 ರಲ್ಲಿ), “ನೆನಪಿನ ನೆಂಟರು” (ಅಂಕಣ ಬರಹಗಳು – ವಿಜಯ ಕರ್ನಾಟಕ 2007 ರಲ್ಲಿ), “ತುಂತುರು” (ಅಭಿನಂದನಾ ಗ್ರಂಥ – 2009 ರಲ್ಲಿ), “ಹೊಳೆ” (ಹನಿಗವಿತೆ – 2011 ರಲ್ಲಿ), “ಜಾತಕ” (ಅಂಕಣ ಬರಹಗಳು – ಕರ್ಮವೀರ 2011 ರಲ್ಲಿ) ಜನಮಾನಸದಲ್ಲಿ ಅತ್ಯಂತ ಜನಪ್ರಿಯವಾಗಿದ್ದವು. ಅವರ ಹನಿಗವನಗಳು ಈಗಲೂ ಸಾವಿರಾರು ಜನರ ಬಾಯಲ್ಲಿ ಹರಿದಾಡುತ್ತಿವೆ.
ಅವರ ಪ್ರಸಿದ್ಧ ಹನಿಗವಿತೆಗಳು
1. ಅಂತರ
=========
ಏರಿದರೆ
ಮಂಚ, ಗದ್ದುಗೆ, ಸಿಂಹಾಸನ
ಹೆಚ್ಚೆಂದರೆ
ಎರಡು ಮೂರಡಿ ಮೇಲೆ
ಜಾರಿದರೆ
ಗೋರಿ, ಸಮಾಧಿ, ಬೃಂದಾವನ
ಹೆಚ್ಚೆಂದರೆ
ಎರಡು ಮೂರಡಿ ಕೆಳಗೆ !
2. ದೇಹ
=======
ಈ ದೇಹ
ಹುಟ್ಟಿಗೆ ಮೊದಲು
ಕಣ್ಣಿಗೆ ಕಾಣದ
ಒಂದು ಕಣ
ಸತ್ತ ಮೇಲೆ
ಒಂದು ದಿನವೂ
ಉಳಿಯದ ಹೆಣ
ಬದುಕಿರುವಾಗ
ಬ್ರಹ್ಮಾಂಡವನ್ನೇ
ಬಯಸುವ ಗುಣ !
3. ಮಾತೃಛಾಯ
============
ತೊನೆಯದಿದ್ದರೂ
ಹಣ್ಣು ಕಾಯಿ ಹೂಗಳನ್ನು
ಬಿದಿರು
ತೊಟ್ಟಿಲಾಗಿ ತೂಗುವುದು
ಮಕ್ಕಳನ್ನು
ಬುಟ್ಟಿಯಾಗಿ ಹೊರುವುದು
ಹಣ್ಣು ಕಾಯಿ ಹೂಗಳನ್ನು !
4. ಹಣತೆ
=======
ಕುಂಬಾರರು ಮಾಡಿದ ಹಣತೆಗೆ
ಗಾಣಿಗರ ಎಣ್ಣೆಯ ತುಂಬಿ
ಒಕ್ಕಲಿಗರು ಬೆಳೆದ ಹತ್ತಿಯ ಹೊಸೆದು
ಬತ್ತಿಯ ಮಾಡಿ ದೀಪವ ಹಚ್ಚಿದರೆ
ಹಲವು ಜಾತಿಗಳು ಕೂಡಿ
ಕುಲಗೆಟ್ಟ ಬೆಳಕು ನೋಡ !
5. ಆಕಾರ
=======
ದೊಡ್ಡ ಆನೆ ಒಂಟೆಯಲ್ಲಿಲ್ಲದ ವಿಷ
ಸಣ್ಣ ಹಾವು ಚೇಳಿನೊಳಗೆ ಬಂತು
ಉದ್ದ ತಾಳೆ ತೆಂಗಿಗಿಲ್ಲದ ಖಾರ
ಗಿಡ್ಡ ಮಣಸಿನ ಗಿಡದೊಳಗೆ ಬಂತು
ಬೆಟ್ಟಕ್ಕೆ ಸಲ್ಲದ ಭಯ ಭೀತಿ
ಅದರ ಸಣ್ಣ ಕವಣೆ ಕಲ್ಲಿಗೆ ಬಂತು !
6. ವಿಪರ್ಯಾಸ
============
ಒಳಗೆ ಬೇಕು ಅನ್ನ
ಹೊರಗೆ ಬೇಕು ಚಿನ್ನ
ಏನು ಇದರ ಮರ್ಮ
ಹೊರಗೆ ಕಿಸಿವ ಹಲ್ಲು
ಒಳಗೆ ಮಸೆವ ಕಲ್ಲು
ಇದು ಯಾವ ಧರ್ಮ
ತಾನೆ ಬೆಳೆದ ಅತ್ತಿಹಣ್ಣ
ನೋಡಿ
ನಾಚಿ ಕುಳಿತ ಬ್ರಹ್ಮ !
ಅವರ ಕವಿತೆಗಳ ಹಿಂದೆ ಭಾಷೆಯನ್ನು ಮತ್ತು ಭಾವನೆಗಳನ್ನು ಆಳವಾಗಿ ಗ್ರಹಿಸುವ ಪ್ರಯತ್ನವಿರುತಿತ್ತು. ಮಾನವೀಯ ಸಂಬಂಧಗಳ ನಡುವಿನ ಮಾನವನ ವಕ್ರ ನಡತೆಗಳ ವ್ಯಂಗ ಚಿತ್ರವನ್ನು ಅತ್ಯಂತ ಸ್ಪಷ್ಟವಾಗಿ ಅಭಿವ್ಯಕ್ತಿಸುತ್ತಿದ್ದರು. ಅವರ ಹನಿಗವನಗಳಲ್ಲಿ ಅವರದೇ ಆದ ದೃಷ್ಟಿಕೋನ, ಮೊನಚಾದ ವೈಚಾರಿಕತೆ, ಚುಚ್ಚುವಂತಹ ವಿಡಂಬನೆ, ಸರಳವಾದ ಭಾಷೆ, ಶುದ್ಧವಾದ ಜಾತ್ಯಾತೀತ ಭಾವನೆ, ಮೊನಚು, ಆಶ್ಚರ್ಯ, ಅನುಕಂಪಗಳನ್ನು ಹೇರಳವಾಗಿ ಕಾಣಬಹುದಾಗಿತ್ತು.
ಒಟ್ಟಿನಲ್ಲಿ ಅವರ ಕೃತಿಗಳು ಪ್ರೀತಿಸಲು ಆತ್ಮೀಯವಾಗಿ ಅನುಭವಿಸಲು ಯೋಗ್ಯವಾಗಿವೆ. ಇವರ ಹನಿಗವನಗಳು ತುಮಕೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪಠ್ಯವಾಗಿದೆ. ಇವರ ಹನಿಗವನಗಳ ಸಂಕಲನ “ಝರಿ” ಉರ್ದು, ಇಂಗ್ಲೀಷ್, ಹಿಂದಿ, ತಮಿಳು, ತೆಲುಗು, ಗುಜರಾತಿ ಭಾಷೆಗಳಿಗೂ ಅನುವಾದಗೊಂಡಿದೆ.
ಜರಗನಹಳ್ಳಿ ಶಿವಶಂಕರ್ ಅವರಿಗೆ ಕರ್ನಾಟಕ ಸರಕಾರದಿಂದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(2005), ದಿನಕರ ದೇಸಾಯಿ ಸಾಹಿತ್ಯ ಪ್ರಶಸ್ತಿ (2006) ಸೇರಿದಂತೆ ಚುಟುಕು ರತ್ನ, ಗೊರೂರು ಸಾಹಿತ್ಯ ಪ್ರಶಸ್ತಿ, ಬೆಂಗಳೂರು ಮಹಾನಗರ ಪಾಲಿಕೆಯಿಂದ ಕೆಂಪೇಗೌಡ ಪ್ರಶಸ್ತಿ, ಸಾಹಿತ್ಯ ಸೇತು ಪ್ರಶಸ್ತಿ, ದುಬೈ ಧ್ವನಿ ಪ್ರತಿಷ್ಠಾನದ ಧ್ವನಿ ಪುರಸ್ಕಾರ, ಸುವರ್ಣ ಕರ್ನಾಟಕ ಭೂಷಣ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಅವರಿಗೆ ಸಂದಿವೆ. 2004, 2008 ಮತ್ತು 2010 ರಲ್ಲಿ ದುಬೈ ಹಾಗೂ ಶಾರ್ಜಾ ದೇಶಗಳಿಗೆ ಪ್ರವಾಸ ಮಾಡಿ ಉಪನ್ಯಾಸ ನೀಡಿದ ಅನುಭವವೂ ಅವರಿಗಿತ್ತು.
ಇಂತಹ ಕನ್ನಡದ ಮೇರು ಪ್ರತಿಭೆ ಕೊರೋನಾದಿಂದಾಗಿ ನಮ್ಮನ್ನು ಅಗಲಿರುವುದು ಎಲ್ಲ ಕನ್ನಡ ಅಭಿಮಾನಿಗಳಿಗೆ ಅತೀವ ದುಃಖವಾಗಿದೆ. ಅವರ ನೆನಪು ಹಾಗೂ ಹೆಸರು ನಮ್ಮ ಹೃದಯಂಗಳದಲ್ಲಿ ಅಜರಾಮರವಾಗಿ ಉಳಿಯಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ2 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

