Connect with us

ಬಹಿರಂಗ

ಜ್ಯೋತಿರಾವ್ ಫುಲೆ : ವಸಾಹತು ಮತ್ತು ಮೇಲ್ವರ್ಗಗಳ ಪ್ರಾಬಲ್ಯವನ್ನು ಪ್ರಶ್ನಿಸಿಸುವ ನೆಲೆಗಳು

Published

on

  • ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಶಿವಮೊಗ್ಗ

ಜ್ಯೋತಿರಾವ್ ಫುಲೆಯವರ ಚಿಂತನೆಗಳನ್ನು ಸಬಾಲ್ಟರ್ನ್ ಓದು ಕಣ್ನೋಟದಲ್ಲಿಟ್ಟು ನೋಡುವ ಕೆಲವು ಅಧ್ಯಯನಗಳು ಈಗಾಗಲೇ ಬಂದಿರುತ್ತವೆ. ಆದರೆ ಫುಲೆಯವರ ಚಿಂತನೆಯ ಸಾಧ್ಯತೆಗಳನ್ನು ಗುರುತಿಸುವುದಕ್ಕಿಂತ, ಅವುಗಳಲ್ಲಿ ಅಡಗಿರುವ ಎಪಿಸ್ಟಮಾಲಜಿಕಲ್ ಬಿಕ್ಕಟ್ಟುಗಳನ್ನು ಹಾಗೂ ತಾತ್ವಿಕ ಸಮಸ್ಯೆಗಳನ್ನು ಬಿಡಿಸಿ ನೋಡುವ ಪ್ರಯತ್ನವನ್ನು ಈ ಅಧ್ಯಯನಗಳಲ್ಲಿ ಮಾಡಲಾಗಿದೆ.

ಹಾಗೂ ವಸಾಹತು ಪ್ರಭುತ್ವಕ್ಕೆ ಫುಲೆಯವರು ನಿಷ್ಠರಾಗಿದ್ದರು ಎಂಬ ಆರೋಪವನ್ನು ಇವರ ಮೇಲೆ ಹೇರಲಾಗಿದೆ. ಅದೇನೆಯಿರಲಿ, ‘ಬ್ರಾಹ್ಮಣಾಚ ಕಸಬ್ (1869), ‘ಗುಲಾಮಗಿರಿ (1873) ಮೊದಲಾದ ತಮ್ಮ ಬರಹಗಳಲ್ಲಿ ಫುಲೆಯವರು, ‘ಶೂದ್ರ-ಅತಿಶೂದ್ರ’ ಪ್ರಜ್ಞೆಯನ್ನು ಎಚ್ಚರಗೊಳಿಸುವ ಅತ್ಯಂತ ಮಹತ್ವದ ಕೆಲಸವನ್ನು ಇವರು ಮಾಡಿರುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.

ಸಬಾಲ್ಟರ್ನ್ ಓದಿನ ಪ್ರಾಥಮಿಕ ಕಣ್ನೋಟವೇ ಸಮೂಹ ಮತ್ತು ವ್ಯಕ್ತಿಪ್ರಜ್ಞೆಯನ್ನು ಜಾಗ್ರತಗೊಳಿಸುವುದು ಮತ್ತು ಆ ಮೂಲಕ ಅವರಲ್ಲಿ ಅವರವರ ಅಸ್ಮಿತೆ, ಅಸ್ತಿತ್ವ ಹಾಗೂ ರಾಜಕೀಯ ನಿಲುವುಗಳನ್ನು ಗುರುತಿಸುವ ಬಗೆಯಾಗಿರುತ್ತದೆ. ಏಕೆಂದರೆ, ಸಬಾಲ್ಟರ್ನ್ ಸಮೂಹಗಳೆಂದು ಇವತ್ತು ನಾವು ಗುರುತಿಸುವ ಬಹುತೇಕ ಸಮೂಹಗಳು ಪ್ರೀ-ಪೊಲಿಟಿಕಲ್ ನೆಲೆಯಲ್ಲಿರುತ್ತವೆ.

ಇಂತಹ ನಿಲುವುಗಳನ್ನು ಪಲ್ಲಟಗೊಳಿಸುವ ಅತ್ಯಂತ ಮಹತ್ವದ ಕೆಲಸವು ಈ ಸಬಾಲ್ಟರ್ನ್ ಪ್ರಜ್ಞೆಯನ್ನು ಎಚ್ಚರಗೊಳಿಸುವ ಮೂಲಕ ನೆರವೇರುತ್ತವೆ ಎಂಬುದು ಗಮನಾರ್ಹ. ಇಂತಹವೊಂದು ಮಹತ್ವದ ಕೆಲಸವನ್ನು ಫುಲೆಯವರು ಮಾಡಿರುತ್ತಾರೆ ಅನ್ನುವುದು ವಿಶೇಷ. 19ನೇ ಶತಮಾನದ ಕಾಲ ಮತ್ತು ಚಾರಿತ್ರಿಕ ನಿಲುವುಗಳು ಕೇವಲ ‘ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತದಲ್ಲಿದ್ದವು. ಈ ನಿಲುವು ಇವತ್ತಿಗೂ ಬದಲಾಗಿರುವುದಿಲ್ಲ.

ಇದೊಂದು ತಪ್ಪು ನಡೆಯೆಂದು ನಾನು ವಾದಿಸಲಾರೆ, ಆದರೆ ರಾಷ್ಟ್ರೀಯತೆಯ ಕಲ್ಪನೆಯು ಈ ದೇಶದ ಎಲ್ಲ ಸಮೂಹಗಳನ್ನು ಒಳ್ಗೊಂಡಿರುವ ಬಗೆಯಾಗಿ ಇವತ್ತಿಗೂ ಮುಂದೆ ಬರಲಿಲ್ಲ. ಹೊರತಾಗಿ ತಾರತಮ್ಯ ಮತ್ತು ಅಸಮಾನ ರಚನೆಗಳನ್ನೇ ನಿರಂತರಗೊಳಿಸುವ ಬಗೆಯಾಗಿ, ಇವತ್ತಿಗೂ ಇದು ಮುಂದುವರೆದಿದೆ. ಹಾಗಾಗಿ ಫುಲೆಯವರ ಚಿಂತನೆಗಳು ಸಬಾಲ್ಟರ್ನ್ ಅಧ್ಯಯನ ಸನ್ನಿವೇಶದಲ್ಲಿ ಮಹತ್ವವನ್ನು ಪಡೆಯುತ್ತವೆ.

ಪರಿಣಾಮವಾಗಿ, ಫುಲೆಯವರ ತಿಳುವಳಿಕೆಗಳಲ್ಲಿ, ಈಗಾಗಲೇ ಚರಿತ್ರೆ, ಸಂಸ್ಕೃತಿ ಚಿಂತನೆಗಳಲ್ಲಿ ನೆಲೆನಿಂತಿರುವ ಏಕಾಕೃತಿಯ ನಿಲುವುಗಳಿಗೆ ಬದಲಾಗಿ, ಈ ದೇಶದ ಬಹುತ್ವದ ಸಾಮಾಜಿಕ, ಸಾಂಸ್ಕೃತಿಕ ವಿನ್ಯಾಸಗಳನ್ನು ಗುರುತಿಸುವ ಇರಾದೆಯನ್ನು ಕಾಣುತ್ತೇವೆ. ಅಂದರೆ ಶೂದ್ರ, ಅತಿಶೂದ್ರ ಪ್ರಜ್ಞೆಯ ಮೂಲಕ ಚರಿತ್ರೆಯೊಳಗೆ ಹುದುಗಿರುವ ಹಿಂಸೆ ಮತ್ತು ಯಜಮಾನಿಕೆಯ ವಿನ್ಯಾಸಗಳನ್ನು ಇವರು ಗುರುತಿಸಿರುತ್ತಾರೆ.

ದಿಟ, ಫುಲೆಯವರು ತಳ/ದಲಿತ/ಶೂದ್ರ ಸಮೂಹಗಳಲ್ಲಿ ಸಬಾಲ್ಟರ್ನ್ ಪ್ರಜ್ಞೆಯನ್ನು ಬೆಳೆಸುವಲ್ಲಿ ಸಫಲವಾಗಲಿಲ್ಲ ಎಂಬ ಆರೋಪಗಳನ್ನು ಮಾಡಲಾಗುತ್ತದೆ. ವಸಾಹತು ಪ್ರಭುತ್ವದ ಪ್ರಾಬಲ್ಯ ಮತ್ತು ಅಧಿಕಾರದ ಹಂಗಿನಲ್ಲಿದ್ದ ಸನ್ನಿವೇಶದಲ್ಲಿ ಫುಲೆಯವರು ರೂಪಿಸಿದ ಈ ಚಿಂತನೆಗಳಿಗೆ ಬಹದೊಡ್ಡ ವ್ಯಾಪ್ತಿಯಿದೆ. ಏಕೆಂದರೆ ಚಾರಿತ್ರಿಕ ವಾಸ್ತವಗಳು ಕೇವಲ ರಾಜಕೀಯವಾಗಿ ಮಾತ್ರ ಒಗ್ಗೂಡಿರುತ್ತವೆ ಹಾಗೂ ಪಳಗಿರುತ್ತವೆ ಎಂಬ ದಿಟವನ್ನು ನಾವು ಗಮನಿಸಬೇಕು.

‘ಸತ್ಯಶೋಧಕ ಸಮಾಜ’ದ ಮೂಲಕ ನಮ್ಮ ಬಹು ಸಮೂಹಗಳ ಸಾಮಾಜಿಕ ವಿನ್ಯಾಸಗಳಲ್ಲಿ ಹುದುಗಿರುವ ಪ್ರಾಬಲ್ಯ ಮತ್ತು ಅಧೀನತೆಯ ಸಂಬಂಧಗಳ ಮೂಲಗಳನ್ನು ಹುಡುಕುವ ಮಹತ್ವದ ಕೆಲಸವನ್ನೂ ಇವರು ಕೈಗೊಂಡಿದ್ದರು. ಎರಡು ಬಗೆಯಲ್ಲಿ ಸಮೂಹಗಳ ಪ್ರಜ್ಞೆಯನ್ನು ಎಚ್ಚರಗೊಳಿಸುವ ನಿಲುವುಗಳನ್ನು ಸತ್ಯಶೋಧಕ ಸಮಾಜದ ಮೂಲಕ ನೆರವೇರಿಸಲಾಗುತಿತ್ತು.

ಒಂದು ಶಿಕ್ಷಣ ಮತ್ತೊಂದು ಸಾಮಾಜಿಕ-ರಾಜಕೀಯ ಪ್ರಜ್ಞೆ ಎಂದು ಈ ನಿಲುವುಗಳನ್ನು ಗುರುತಿಸಬಹುದು. ಈ ಎರಡೂ ನಿಲುವುಗಳು ಸಮೂಹಗಳ ಪ್ರತಿನಿಧೀಕರಣದ ಅಯಾಮಗಳನ್ನು ಖಚಿತಗೊಳಿಸುವುದಕ್ಕೇ ಅತ್ಯಂತ ಒತ್ತಾಸೆಯಾಗಿದ್ದವು. ರಾಜಕೀಯ-ಸಾಮಾಜಿಕ ಹಾಗೂ ನಮ್ಮ ಚರಿತ್ರೆಯನ್ನು ಕಟ್ಟಿಕೊಳ್ಳುವುದಕ್ಕೆ ಅಗತ್ಯವಾದ ಬಂಡಾಯದ ಮಾದರಿಗಳು ಫುಲೆಯವರ ಚಿಂತನೆಗಳಲ್ಲಿ ನಿಚ್ಚಳವಾಗಿ ಮೂಡಿಬಂದಿರುತ್ತವೆ.

ಅಂಬೇಡ್ಕರ್ ಅವರ ಪ್ರಭಾವ ಹಾಗೂ ಆಲೋಚನೆಗಳ ಪರಿಣಾಮವಾಗಿ, ಭಾರತ/ಕರ್ನಾಟಕದಲ್ಲಿ ಪ್ರತಿರೋಧದ ಮಾದರಿಗಳನ್ನು ಮರು ವಿನ್ಯಾಸಗೊಳಿಸುವ ನಡೆಗಳು ಅತ್ಯಂತ ತೀವ್ರವಾಗಿ ನಡೆದಿರುವುದನ್ನು ನಾವು ಕಾಣುತ್ತೇವೆ. ದಿಟ, ಕರ್ನಾಟಕದ ಸಾಹಿತ್ಯ ಚರಿತ್ರೆಗಳನ್ನು ಗಮನಿಸಿದರೆ, ಹಲವು ಬಗೆಯ ಪ್ರತಿರೋಧದ ಮಾದರಿಗಳನ್ನು ನಾವು ಗುರುತಿಸುತ್ತೇವೆ.

ಆದರೆ ಪ್ರಜಾಪ್ರಭುತ್ವದ ಸನ್ನಿವೇಶದಲ್ಲಿಯೂ ತಳ-ದಲಿತ-ಶೂದ್ರ ಸಮೂಹಗಳು ಯಾವ ಬಗೆಯ ಬಿಕ್ಕಟ್ಟುಗಳನ್ನು ಎದುರಿಸುತ್ತವೆ ಎಂಬುದನ್ನು ಮನಗಂಡಾಗ, ಅಂಬೇಡ್ಕರ್ ಮತ್ತು ಫುಲೆಯವರಂತವರು ರೂಪಿಸಿದ ಚಿಂತನೆಯ ಮಾದರಿಗಳು, ನಮ್ಮ ಸದ್ಯದ ಚರಿತ್ರೆ, ರಾಜಕಾರಣಗಳು ರೂಪಿಸುವ ಏಕಾಕೃತಿಯ ಮಾದರಿಗಳಿಗೆ ಪ್ರತಿರೋಧವನ್ನು ಒಡ್ಡುವಲ್ಲಿ ಸಂಘಟನೆಗಳು ಹೇಗೆ ಬೆಳೆದುಬಂದವು ಎಂಬುದನ್ನು ಕುರಿತು ಯೋಚಿಸುವ ಜರೂರಿದೆ.

ಇಲ್ಲಿ ಇವತ್ತು ನಾವು ಚರ್ಚಿಸುತ್ತಿರುವ ಪ್ರತಿರೋಧದ ಈ ಮಾದರಿಗಳು ಸಾಮಾಜಿಕ ಮತ್ತು ರಾಜಕೀಯ ನೆಲೆಯಿಂದ ಪ್ರೇರಣೆಗಳನ್ನು ಪಡೆದಿರುತ್ತವೆ. ಸಾಮಾಜಿಕ ಪ್ರೇರಣೆಗಳು ರಾಜಕೀಯ ನೆಲೆಯಿಂದ ಪ್ರತಿರೋಧದ ಮಾದರಿಗಳನ್ನು ರೂಪಿಸುವುದಕ್ಕೆ ಕಾರಣವಾಗಿರುವಂತೆ, ಹಾಗೇನೇ ರಾಜಕೀಯ ಪ್ರೇರಣೆಗಳು ಸಾಮಾಜಿಕವಾಗಿ ಸಂಘಟನೆಗೊಳ್ಳಲೂ ಕಾರಣವಾಗಿರುತ್ತವೆ.

ಅಂದರೆ, ಇವುಗಳ ನಡುವೆ ಅದಲು-ಬದಲು ಮಾಡಿಯೂ ನೋಡುವ ಸಾಧ್ಯತೆ ಇದೆ ಎಂಬಂಶವನ್ನು ನಾವಿಲ್ಲಿ ಮನಗಾಣಬೇಕಿದೆ. ಈ ದೆಸೆಯಲ್ಲಿ ಪ್ರತಿರೋಧದ ಮಾದರಿಗಳನ್ನು ಚರ್ಚಿಸುವುದಾದರೆ, 1970ರ ದಶಕದಲ್ಲಿ, ಕರ್ನಾಟಕದಲ್ಲಿ ಮುಂಚೂಣಿಗೆ ಬಂದಂತಹ ‘ಕರ್ನಾಟಕ ದಲಿತ ಸಂಘರ್ಷ ಸಮಿತಿ’ (ಬಿ, ಕೃಷ್ಣಪ್ಪ,) ಹಾಗೂ ‘ಬೂಸಾ ಚಳುವಳಿ’ಗಳ (ಬಿ.ಬಸವಲಿಂಗಪ್ಪನವರು) ಪರಿಣಾಮಗಳನ್ನು ಕುರಿತು ಇವತ್ತು ಯೋಚಿಸಿಬೇಕಿದೆ.

ಆದರೆ ಇವುಗಳ ಬಗೆಗೆ ಇವತ್ತು ನಾವು ಹಲವು ರೀತಿಯ ಫಲಿತಗಳನ್ನು ಕಾಣುತ್ತೇವೆ. ಆದರೆ ಈ ಸಂಘಟನೆಗಳು ಹುಟ್ಟು ಹಾಕಿರುವ ವೈಚಾರಿಕ ವಿನ್ಯಾಸಗಳು ಮಾತ್ರ ಹಲವು ಸಾಮಾಜಿಕ-ರಾಜಕೀಯ ಪಲ್ಲಟಗಳಿಗೆ ಕಾರಣವಾಗಿರುತ್ತವೆ. ಅಂದ ತಕ್ಷಣವೇ, ಇವತ್ತು ಈ ಸಂಘಟನೆಯೊಳಗೆ ಏರ್ಪಟ್ಟಿರುವ ಬಿರುಕುಗಳನ್ನು ಮಾತ್ರ ದೊಡ್ಡದಾಗಿ ಬೆಟ್ಟುಮಾಡಿ ತೋರಿಸುವ ಧೋರಣೆಗಳನ್ನು ನೋಡುತ್ತೇವೆ.

ಆದರೆ ಈ ಸಂಘಟನೆಗಳು ಉಂಟುಮಾಡಿರುವ ಪರಿಣಾಮಗಳು ನಗಣ್ಯವಾಗುತ್ತವೆ ಮತ್ತು ಚಾರಿತ್ರಿಕವಾಗಿ ಸೋಲೊಪ್ಪುವ ನೆಲೆಗಳಿಗೆ ಇವುಗಳನ್ನು ಗುರಿಮಾಡುತ್ತೇವೆ. ಇದಕ್ಕೆ ಎರಡು ಬಗೆಯ ಕಾರಣಗಳನ್ನು ಇಲ್ಲಿ ಕಂಡುಕೊಳ್ಳಬಹುದು. ಇಂತಹ ಸಂಘಟನೆಗಳ ತಾತ್ವಿಕತೆ ಮತ್ತು ಪರಿಕರಗಳ ವಿನ್ಯಾಸದಲ್ಲಿಯೇ ಲೋಪಗಳಿವೆ ಎಂಬುದು ಒಂದು ಕಾರಣವಾದರೆ, ಮತ್ತೊಂದು ಕಾರಣವು, ಈ ಸಂಘಟನೆಯೊಳಗೆ ಸೇರಿರುವ ಜಾತಿ ಮತ್ತು ಒಳಪಂಗಡಗಳ ನಡುವಣ ಅಧಿಕಾರ ಸಂಬಂಧದ ನೆಲೆಗಳು ಎಂದೇ ಹೇಳಬಹುದಾಗಿದೆ.

ಏಕೆಂದರೆ, ರಾಜಕೀಯ ಅಧಿಕಾರದ ಮೇಲಾಟದಲ್ಲಿ ಎದುರಾಗುವ ಪರಿಣಾಮಗಳು ಎಂತಹವು ಎಂಬುದನ್ನು ಇವತ್ತು ಊಹಿಸುವುದಕ್ಕೂ ಕಷ್ಟ. ಇವತ್ತು ಇಡೀ ಭಾರತದುದ್ದಕ್ಕೂ ಕಾಣುವ ರಾಜಕೀಯ ಧೃವೀಕರಣದ ಮಾದರಿಗಳನ್ನು ನೋಡಿದರೆ, ಈ ಕಷ್ಟದ ಹಿಂದಿನ ನೆಲೆಗಳು ನಮಗೆ ನಿಚ್ಚಳವಾಗಿ ತೋರುತ್ತವೆ. ಯಾವ ಸಾಮಾಜಿಕ-ಸಾಂಸ್ಕೃತಿಕ ಮತ್ತು ರಾಜಕೀಯ ನಿಲುವುಗಳನ್ನು ವಿರೋಧಿಸಲೆಂದು ಈ ಸಂಘಟನೆಗಳು ಹುಟ್ಟಿಕೊಂಡಿದ್ದವೋ ಅದನ್ನೆಲ್ಲ ಮರೆತು ಅಧಿಕಾರದ ಅಧೀನತೆಗೆ ಒಳಗಾಗುತ್ತಿವೆ.

ಅಂದರೆ ಇದು ದಲಿತ ಮತ್ತು ಹಿಂದುಳಿದ ಸಮೂಹಗಳಿಗೆ ಅಧಿಕಾರವನ್ನು ನಿರಾಕರಿಸುವುದಲ್ಲ. ಬದಲಾಗಿ, ಯಾರು ಇದುವರೆಗೂ ಅಧಿಕಾರ ಕೇಂದ್ರಗಳಲ್ಲಿ ನೆಲೆಗೊಂಡು, ತಳ-ದಲಿತ-ಶೂದ್ರ ಸಮೂಹಗಳನ್ನು ಶೋಷಣೆಗೆ ಈಡು ಮಾಡಿದ್ದವೋ, ಅಂತಹ ಸಮೂಹಗಳು ರೂಪಿಸುವ ರಾಜಕೀಯ ಅಧಿಕಾರಕ್ಕೆ ಈ ಎಲ್ಲ ತಳ-ದಲಿತ-ಶೂದ್ರ ಸಮೂಹಗಳು ಅಸ್ತ್ರಗಳಾಗಿ ಬಳಕೆಯಾಗುತ್ತವೆ.

ಇವರಿಗೆ ಅಧಿಕಾರವೆಂಬುದು ಮಾಧ್ಯಮವಾಗಬೇಕು ಮತ್ತು ಸಾಮಾಜಿಕ ಸ್ವಾಯತ್ತತೆಯನ್ನು ತಂದುಕೊಡುವ ಸಾಮಾಜಿಕ ವಿನ್ಯಾಸವಾಗಬೇಕು. ಈ ಕಾರಣದಿಂದ ಈ ಎಲ್ಲ ಸಬಾಲ್ಟರ್ನ್ ಸಮೂಹಗಳಿಗೆ ಇವತ್ತು ಬೇಕಾಗಿರುವುದು ಹೊಸ ಸಾಮಾಜಿಕ ವ್ಯವಸ್ಥೆಯೇ ಹೊರತು, ಕೇವಲ ಅಧಿಕಾರವಲ್ಲ.

ಅಂದರೆ, ಸಾಮಾಜಿಕ ರಚನೆಯಲ್ಲಿಯೇ ಶೋಷಣೆಯ ಮಾದರಿಗಳನ್ನು ಅಡಕಗೊಳಿಸುವಂತೆ, ಈ ಹೊಸ ಸಾಮಾಜಿಕ ವ್ಯವಸ್ಥೆಯಲ್ಲಿಯೇ, ಎಲ್ಲ ತಳ-ದಲಿತ-ಶೂದ್ರ ಸಮೂಹಗಳು ಹಸನಾಗಿ ಬದುಕುವುದಕ್ಕೆ ಬೇಕಾದ ಅಧಿಕಾರ ಮತ್ತು ಜ್ಞಾನಶಿಸ್ತುಗಳನ್ನು ನೆಲೆಗೊಳಿಸುವ ಅಗತ್ಯವಿದೆ. ಈಗಾಗಲೇ ಹೇಳಿದಂತೆ, ಚರಿತ್ರೆ, ಮೀಮಾಂಸೆಗಳಂತಹ ಜ್ಞಾನಶಿಸ್ತುಗಳನ್ನು ರೂಪಿಸುವ ನಿಟ್ಟಿನಲ್ಲಿ ಹೋರಾಟಗಳು ಇಲ್ಲವೇ ಚಳವಳಿಗಳು ತಲೆಯೆತ್ತಬೇಕಿದೆ.

ಇವುಗಳು ಕೇವಲ ರಾಜಕೀಯ ಸರಿತನ ಇಲ್ಲವೇ ಕಾನೂನುಗಳನ್ನು ಜಾರಿಗೊಳಿಸುವುದಷ್ಟಕ್ಕೆ ಮಾತ್ರ ಸೀಮಿತಗೊಳ್ಳುವುದು ಸರಿಯಾದ ನಿಲುವಲ್ಲ.
ಅದೇನೇ ಇರಲಿ, ದಲಿತ ಸಂಘರ್ಷ ಸಮಿತಿ ಮತ್ತು ಬೂಸಾ ಚಳುವಳಿಗಳು ಸಾಂಸ್ಕೃತಿಕ ಮೀಮಾಂಸೆ, ಚರಿತ್ರೆ, ರಾಜಕೀಯ ತತ್ವಗಳ ಮೂಲಭೂತವಾದವನ್ನು ಪಲ್ಲಟಗೊಳಿಸುವ ಕೆಲಸವನ್ನು ಮಾಡಿರುವುದನ್ನು ಮರೆಯುವಂತಿಲ್ಲ.

ಆದರೆ ಇವುಗಳು ಬೌದ್ಧಿಕ ಸ್ವಾಯತ್ತತೆಯನ್ನು ರೂಪಿಸುವಷ್ಟು ಬಲವಾಗಿ ಬೆಳೆದಿಲ್ಲವೆಂಬುದು ಕೂಡ ಅಷ್ಟೇ ದಿಟವಾದ ಸಂಗತಿಯಾಗಿದೆ. ಈಚೆಗೆ ನಡೆದ ಚಲೋ-ಉಡುಪಿಯಂತಹ ಹೋರಾಟಗಳೂ ಒಂದು ರಾಜಕೀಯ ಪರಿಣಾಮವನ್ನು ಬೀರಿರುತ್ತವೆ. ಆದರೆ ಈ ಪರಿಣಾಮವು ಕೇವಲ ಒಂದು ಚಾರಿತ್ರಕ ಬೆಳವಣಿಗೆಯಾಗಿ ಇರುತ್ತದೆಯೇ ಹೊರತು ಈಗಾಗಲೇ ಅಸ್ತಿತ್ವದಲ್ಲಿರುವ ಯಾವುದೇ ಬಗೆಯ ಚಾರಿತ್ರಿಕ ತಿಳಿವು ಮತ್ತು ನಂಬಿಕೆಗಳನ್ನು ಪಲ್ಲಟಗೊಳಿಸುವಲ್ಲಿ ಅತ್ಯಂತ ಪ್ರಬಲವಾದ ವಿದ್ಯಮಾನವಾಗುವುದಿಲ್ಲ.

ಏಕೆಂದರೆ ತಳ-ದಲಿತ-ಶೂದ್ರ-ಅಲ್ಪಸಂಖ್ಯಾತ ಸಮೂಹಗಳನ್ನು ಒಟ್ಟಾಗಿ ರಾಜಕೀಯ ಮತ್ತು ಸಾಮಾಜಿಕ ಶಕ್ತಿಯನ್ನಾಗಿ ಪ್ರದರ್ಶಿಸುವುದಕ್ಕೆ ಬೇಕಾದ ಸಿದ್ಧತೆಗಳು ನಮ್ಮಲ್ಲಿ ಇನ್ನೂ ಸಜ್ಜುಗೊಂಡಿಲ್ಲ. ಇಂತಹ ವ್ಯವಸ್ಥೆಯು ಎರಡು ಬಗೆಯಲ್ಲಿ ನೆರವೇರುತ್ತದೆ. ಒಂದು ಬೌದ್ಧಿಕ ನೆಲೆಯಿಂದ ಮತ್ತೊಂದು ಸಾಮಾಜಿಕ-ರಾಜಕೀಯ ನೆಲೆಯಿಂದ ಎಂದು ಹೇಳಬಹುದು. ಇವೆರಡೂ ಪೂರಕವಾಗಿ ನಡೆಯುವ ಅವಶ್ಯಕತೆ ಇರುತ್ತದೆ.

ಕೇವಲ ಬೌದ್ಧಿಕ ಇಲ್ಲವೇ ರಾಜಕೀಯ ಹೋರಾಟಗಳಿಂದ ನಮ್ಮ ಸಾಮಾಜಿಕ-ರಾಜಕೀಯ ವ್ಯವಸ್ಥೆಗಳನ್ನು ರೂಪಾಂತರಿಸುವ ಕೆಲಸವು ನಡೆಯಲಾರದು. ಬೌದ್ಧಿಕತೆ ಎಂಬುದು ಪರಮಸತ್ಯವಲ್ಲ ದಿಟ. ಆದರೆ ಬೌದ್ಧಿಕ ಕ್ರಿಯಾಶೀಲತೆಯು ನಮ್ಮ ಪ್ರಜ್ಞೆಯನ್ನು ಎಚ್ಚರಿಸಬಲ್ಲದು ಅನ್ನುವುದು ಮಾತ್ರ ದಿಟ. ಆದರೆ ಕರ್ನಾಟಕ ಇಲ್ಲವೇ ಒಟ್ಟಾರೆ ಭಾರತದಲ್ಲಿ ‘ನಿನ್ನೆಗಳ ಮರುರಚನೆ’ಯಲ್ಲಿ ಹುದುಗಿರುವ ತಾತ್ವಿಕ ಲೋಪಗಳಿಂದ, ಈ ಬೌದ್ಧಿಕತೆ ಎಂಬುದು ಕೇವಲ ಶೈಕ್ಷಣಿಕ ಕಸರತ್ತಾಗಿ ಕಂಡುಬಂದಿದೆ. ಹಾಗಾಗಿ ಕರ್ನಾಟಕದ ನಿನ್ನೆಗಳ ಮರುರಚನೆಯ ವಿನ್ಯಾಸಗಳನ್ನು ಕುರಿತು ಇಂದು ವಿಶ್ಲೇಷಿಸುವ ಜರೂರಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಸಿದ್ಧಾಂತ ಮತ್ತು ಪತ್ರಿಕೋದ್ಯಮ

Published

on

  • ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್

ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು. ಅವರು ಪತ್ರಿಕೋದ್ಯಮದ ನ್ಯೂಟ್ರಾಲಿಟಿ ಕುರಿತು ಮಾತಾಡುತ್ತಾ, ʼನಾವು ಪತ್ರಕರ್ತರು ನಿಮ್ಮ ರೀತಿ ಯೋಚನೆ ಮಾಡೋದಕ್ಕೆ ಆಗಲ್ಲ. ನಾವು ಯಾವತ್ತೂ ಯಾವುದೇ ಸಿದ್ಧಾಂತಕ್ಕೆ ವಾಲಿಕೊಳ್ಳದೇ ತಟಸ್ಥತೆ ಕಾಪಾಡಬೇಕಾಗುತ್ತದೆʼ ಎಂದು ಹೇಳಿದರು. ʼಅವರ ಜೊತೆ ನಾನು ವಾದಿಸಿದೆ.

ಸರ್, ಸುಳ್ಳನ್ನೇ ಬಂಡವಾಳ ಮಾಡಿಕೊಂಡ ಸಿದ್ಧಾಂತಗಳು ರಾರಾಜಿಸುವಾಗ ಸತ್ಯವನ್ನು ಹುಡುಕಲು ಸಹ ಸಿದ್ಧಾಂತದ ಸಹಾಯ ಬೇಕಾಗುತ್ತದೆ. ಯಾವ ವ್ಯಕ್ತಿಯೂ ಸಿದ್ಧಾಂತದ ಹೊರಗಾಗಿ ಇರಲು ಸಾಧ್ಯವಿಲ್ಲ. ನನಗೆ ಸಿದ್ದಾಂತವೇ ಇಲ್ಲ ಎನ್ನುವ ವ್ಯಕ್ತಿಯನ್ನು ಕೂಡಾ ಅವನಿಗೆ ತಿಳಿದೋ ತಿಳಿಯದೆಯೋ ಒಂದಲ್ಲಾ ಒಂದು ಸಿದ್ದಾಂತ ಇಲ್ಲವೇ ಹಲವು ಸಿದ್ಧಾಂತಗಳು ನಿರ್ದೇಶಿಸುತ್ತಿರುತ್ತವಲ್ಲ.. ʼ ಎಂದ ನನ್ನ ಮಾತಿಗೆ ನಮಗೆ ಪತ್ರಕರ್ತರಿಗೆ ಹಾಗೆ ಯೋಚಿಸಲು ಬರುವುದಿಲ್ಲ. ನೀವು ಎಡ ಪಂಥ ಅಂತೀರಿ, ಅವರು ಬಲಪಂಥ ಅಂತಾರೆ, ನಾವು ಇವೆರಡರ ನಡುವೆ ಸತ್ಯ ಹುಡುಕ್ತೀವಿʼ ಎಂದೆಲ್ಲಾ ಹೇಳಿದರು. ಕೊನೆಗೆ ಯಾರೂ ರಾಜಿಯಾಗಲಿಲ್ಲ.

ಇದಾಗಿ ಹದಿನೈದು ವರ್ಷಗಳ ನಂತರ, 2019ರಲ್ಲಿ ಅದೇ ಪತ್ರಕರ್ತ ಸ್ನೇಹಿತರು ನಮ್ಮ ಜೊತೆ ಕೆಲಸ ಮಾಡುತ್ತಿದ್ದರು. ಅವರು ನರೇಂದ್ರ ಮೋದಿ ಸರ್ಕಾರದ ಆರ್ಥಿಕ ವಂಚನೆಗಳನ್ನು ಅದ್ಭುತ ರೀತಿಯಲ್ಲಿ ಅಂಕಿಅಂಶಗಳ ಸಮೇತ ಬಯಲು ಮಾಡುತ್ತಿದ್ದುದು ಕಂಡು ನನಗೆ ಅಚ್ಚರಿ ಮತ್ತು ಸಂತೋಷವಾಗಿತ್ತು. ಅಂದು ಅವರು ನಿಜಕ್ಕೂ ಸತ್ಯದ ಪರವಾಗಿದ್ದರು. ಆದರೆ ಅವರ ಬರೆಹಗಳನ್ನು ಯಾರಾದರೂ ಬಲಪಂಥೀಯರು ಓದಿದರೆ ಅವರಿಗೆ ಖಂಡಿತಾ ಇವರು ʼಎಡಪಂಥೀಯ ಸಿದ್ಧಾಂತಿʼ, ʼನಗರ ನಕ್ಸಲ್ʼ ಎಂದೆಲ್ಲಾ ಸುಲಭವಾಗಿ ಹಣೆಪಟ್ಟಿ ಕಟ್ಟಬಹುದಿತ್ತು. ಆದರೆ ಆ ಪತ್ರಕರ್ತ ಸ್ನೇಹಿತರು ನಿಜಕ್ಕೂ ಈ ದೇಶದ ಭವಿಷ್ಯದ ಬಗ್ಗೆ ತುಂಬಾ ಆತಂಕಗೊಂಡು, ಕಾಳಜಿಯಿಂದ ಕೆಲಸ ಮಾಡುತ್ತಿದ್ದರು. ಕೊನೆಗೆ ಅವರಿಗೂ ಸಹ ಅವರು ಹಿಂದೆ ಹೇಳಿದ್ದ ರೀತಿಯಲ್ಲಿ ತಟಸ್ಥವಾಗಿ ಪತ್ರಿಕೋದ್ಯಮ ನಡೆಸುವುದು ಸಾಧ್ಯವಿಲ್ಲ ಎಂಬ ಅರಿವಾಗಿರಬಹುದು ಎಂದುಕೊಂಡೆ. ಹೌದು ಪತ್ರಕತ್ರರಾದವರು ಮಾಡಲು ಇರುವ ಬಹಳ ಕೆಲಸಗಳ ನಡುವೆಯೂ ಅವರು ಅದ್ಯತೆಯನ್ನು ಗುರುತಿಸಿಕೊಂಡಿದ್ದರು.

ಪತ್ರಿಕೋದ್ಯಮದ ಬಗ್ಗೆ ಮಾತಾಡುವಾಗ ನಾವು ಒಂದು ಪ್ರಾಥಮಿಕ ಸಂಗತಿಯನ್ನು ತಿಳಿದುಕೊಳ್ಳಬೇಕು. ನಮ್ಮ ದೇಶದಲ್ಲಿ ಪತ್ರಿಕೋದ್ಯಮ ಆರಂಭವಾದ ಸಂದರ್ಭದಲ್ಲಿ ಯಾವೆಲ್ಲಾ ಭಾರತೀಯರು ಪತ್ರಿಕೆಗಳನ್ನು ಹೊರತರುತ್ತಿದ್ದರೋ ಅವರೆಲ್ಲರೂ ಕಟು ಸಿದ್ಧಾಂತಿಗಳಾಗಿದ್ದರು. ಸಾಮ್ರಾಜ್ಯವಾದದ ವಿರುದ್ಧದ ಸಿದ್ದಾಂತ ಅವರೆಲ್ಲರನ್ನು ಮುನ್ನಡೆಸುತ್ತಿತ್ತು. ಬಹುತೇಕ ಅವರೆಲ್ಲರೂ ಸ್ವಾತಂತ್ರ್ಯ ಹೋರಾಟಗಾರರು ಇಲ್ಲವೇ ಸ್ವಾಭಿಮಾನ ಚಳವಳಿಯ ಹೋರಾಟಗಾರರು, ನಾಯಕರು ಆಗಿದ್ದರು. ಅಂತಹ ಸ್ಪಷ್ಟ ಸೈದ್ಧಾಂತಿಕ ಬುನಾದಿಯಿಟ್ಟುಕೊಂಡು ಅವರೆಲ್ಲಾ ಬ್ರಿಟಿಷರ ವಿರುದ್ಧ ಪತ್ರಿಕೋದ್ಯಮ ನಡೆಸದಿದ್ದರೆ ಈ ದೇಶದ ಪತ್ರಿಕೋದ್ಯಮದ ಇತಿಹಾಸ ಅತ್ಯಂತ ಟೊಳ್ಳಾದ, ಬೂಸಾ ಇತಿಹಾಸವಾಗುತ್ತಿತ್ತು.

ಕೆಲ ಬ್ರಿಟಿಷ್ ಪತ್ರಕರ್ತರು ಹೇಗೆ ಬ್ರಿಟಿಷ್ ಅಧಿಕಾರಿಗಳ ಬೆಡ್ ರೂಮ್ ಸ್ಟೋರಿಗಳನ್ನು ಚಪ್ಪರಿಸಿಕೊಂಡು ಅದನ್ನೇ ಪತ್ರಿಕೋದ್ಯಮ ಎಂದು ಬೀಗುತ್ತಿದ್ದರೋ ಅಷ್ಟರಲ್ಲೇ ಭಾರತೀಯ ಪತ್ರಿಕೋದ್ಯಮ ಉಳಿದುಬಿಡುತ್ತಿತ್ತು. ಆದರೆ ಹೀಗೆ ಆಗಲು ಬಿಡದೇ ಉದಾತ್ತ ಧ್ಯೇಯಗಳ ಮೂಲಕ ದೇಶದ ಪತ್ರಿಕೋದ್ಯಮ ಬೆಳೆಸಿದ 19ನೆಯ ಶತಮಾನದ ಅಂತಹ ಧೀಮಂತ ಪತ್ರಕರ್ತರು ಹಲವರು. ಸುರೇಂದ್ರ ನಾಥ್ ಬ್ಯಾನರ್ಜಿ (ಬೆಂಗಾಲಿ ಪತ್ರಿಕೆ- 1879) ಪತ್ರಕರ್ತರಾಗಿ ಕೆಲಸ ಮಾಡುತ್ತಲೇ ಸತ್ಯ ಹೇಳಿದ ಕಾರಣಕ್ಕೆ ಬ್ರಿಟಿಷ್ ಸರ್ಕಾರ ಅವರನ್ನು ವರ್ನಾಕ್ಯುಲರ್ ಪ್ರೆಸ್ ಕಾಯ್ದೆಯ ಅಡಿ ಜೈಲಿಗಟ್ಟಿತ್ತು. ಸಂವಾದ ಕೌಮುದಿ ಎಂಬ ಪತ್ರಿಕೆ ನಡೆಸುತ್ತಿದ್ದ ರಾಜಾರಾಮ ಮೋಹನ್ ರಾಯ್ ಒಬ್ಬ ಸ್ಪಷ್ಟ ವಿಚಾರವಾದಿಯಾಗಿದ್ದರು.

ಅವರು ಈ ದೇಶದ ಅನಿಷ್ಟಗಳ ಕುರಿತೇ ತಮ್ಮ ಪತ್ರಿಕೆಯಲ್ಲಿ ಬರೆಯುತ್ತಾ ಹೋದರು. ಇದೇ ಕೆಲಸವನ್ನು ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ ಆರಂಭಿಸಿದ ಜಂಬೇಕರ್ ಮಾಡಿದರು, ಅವರು ತಮ್ಮ ದರ್ಪಣ್ ಪತ್ರಿಕೆಯ ಮೂಲಕ ಸಾಮಾಜಿಕ ಅನಿಷ್ಟಗಳು ಕುರಿತು ಜಾಗೃತಿ ಮೂಡಿಸಿದರು- ಇವರನ್ನು ಮರಾಠಿ ಪತ್ರಿಕೋದ್ಯಮದ ಪಿತಾಮಹ ಎಂದು ಕರೆಯಲಾಗುತ್ತದೆ. ಬಂಗಾಳದಲ್ಲಿ ಹರೀಶ್ಚಂದ್ರ ರಾಯ್ ಎಂಬುವವರು ಬಂಗದರ್ಶನ್ ಎಂಬ ಪತ್ರಿಕೆ ತಂದರು; ಗುಜರಾತಿಯಲ್ಲಿ ʼಬಾಂಬೆ ಸಮಾಚಾರ್ʼ ಪತ್ರಿಕೆ ಆರಂಭಿಸಿದ ಫರ್ದುನ್ಜಿ ಮರ್ಜ್ ಬಾನ್ ಎಂಬುವವರು ಸಹ ಪತ್ರಿಕೆಯ ಮೂಲಕ ಸಮಾಜ ಸುಧಾರಣೆಗೆ ಒತ್ತು ಕೊಟ್ಟರು. ಇನ್ನು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಬಾಲಗಂಗಾಧರ ತಿಲಕ್ ಕೇಸರಿ ಮತ್ತು ಮರಾಟಾ ಪತ್ರಿಕೆ ಹೊರಡಿಸುತ್ತಿದ್ದರು, ಗಾಂದೀಜಿಯವರು ಆಫ್ರಿಕಾದಲ್ಲಿದ್ದಾಗಲೇ ಇಂಡಿಯನ್ ಒಪಿನಿಯನ್ ಪತ್ರಿಕೆ ನಡೆಸುತ್ತಿದ್ದರೆ, ಭಾರತಕ್ಕೆ ಬಂದ ಮೇಲೆ ಯಂಗ್ ಇಂಡಿಯಾ ಮತ್ತು ಹರಿಜನ್ ಎಂಬ ಪತ್ರಿಕೆಗಳನ್ನು ಹೊರತಂದರು,

ಸುಭಾಷ್ ಚಂದ್ರ ಬೋಸ್ ಅವರು ಸ್ವರಾಜ್ ಪತ್ರಿಕೆಯ ಸಂಪಾದಕರಾಗಿದ್ದರು, ಲಾಲಾ ಲಜಪತ್ ರಾಯ್ ಅವರು ದ ಟ್ರಿಬ್ಯೂನ್ ಎಂಬ ಇಂಗ್ಲಿಷ್ ಪತ್ರಿಕೆ ತಂದರು, ಜೊತೆಗೆ ವಂದೆ ಮಾತರಂ ಎಂಬ ಉರ್ದು ಪತ್ರಿಕೆಯನ್ನೂ ಪ್ರಕಟಿಸುತ್ತಿದ್ದರು- ಇವುಗಳ ಮೂಲಕ ಸ್ವದೇಶಿ ಚಿಂತನೆಯನ್ನು ಅಥವಾ ಸಿದ್ಧಾಂತವನ್ನು ಪ್ರಚುರಪಡಿಸಿದರು, ಹೋಂರೂಲ್ ಚಳವಳಿಯ ಮುಂದಾಳು ಅನಿಬೆಸೆಂಟ್ ಅವರು ನ್ಯೂ ಇಂಡಿಯಾ ಪತ್ರಿಕೆ ತಂದರು, ಇನ್ನು ಮದನ್ ಮೋಹನ್ ಮಾಳವೀಯ ಅವರು ಮೋತಿಲಾಲ್ ನೆಹರೂ ಜೊತೆ ಸೇರಿಕೊಂಡು ದ ಲೀಡರ್ ಎಂಬ ಪತ್ರಿಕೆ ತಂದರೆ, ನಂತರ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯನ್ನೂ ಪುನರುಜ್ಜೀವಗೊಳಿಸಿದರು. ಇನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ʼಅಸ್ಪೃಶ್ಯರಿಗೆ ಈ ದೇಶದಲ್ಲಿ ಪತ್ರಿಕೆಯಿಲ್ಲʼ ಎಂದು ಘೋಷಿಸಿ ಮೊದಲಿಗೆ ಶಾಹು ಮಹಾರಾಜರ ಬೆಂಬಲದಿಂದ ಮೂಕನಾಯಕ ಪತ್ರಿಕೆ (1920) ತಂದರು; ನಂತರ ಬಹಿಷ್ಕೃತ ಭಾರತ (1927), ನಂತರ ಸಮತಾ (1928), ನಂತರ ಜನತಾ (1930) ಹಾಗೂ ಪ್ರಬುದ್ಧ ಭಾರತ (1956) ಪತ್ರಿಕೆಗಳನ್ನು ಹೊರಡಿಸಿ ನಿರಂತರವಾಗಿ ಅವುಗಳಲ್ಲಿ ಬರೆಯುತ್ತಾ ತಾವೊಬ್ಬ ಧೀಮಂತ ಪತ್ರಕರ್ತ ಎಂಬುದನ್ನೂ ನಿರೂಪಿಸಿದ್ದರು.

ಇವರನ್ನೆಲ್ಲಾ ಹೊರಗಿಟ್ಟು ಕೇವಲ ಬ್ರಿಟಿಷರು ತಂದ ಬೆಂಗಾಲ್ ಗೆಜೆಟ್ ನಂತವುಗಳನ್ನು ಮಾತ್ರವೇ ಭಾರತದ ಪತ್ರಿಕೋದ್ಯಮದ ಇತಿಹಾಸ ಎಂದು ಹೇಳಲು ಬರುತ್ತದೆಯೇ? ಈ ದೇಶದ ಪತ್ರಿಕೋದ್ಯಮದ ಇತಿಹಾಸದ ಸೈದ್ಧಾಂತಿಕ ಅಡಿಪಾಯ ಅತ್ಯಂತ ಭದ್ರವಾಗಿತ್ತು ಎಂಬುದಕ್ಕೆ ಇವೆಲ್ಲಾ ಸಾಕ್ಷಿಯಲ್ಲವೆ? ಅಲ್ಲಿ ಎಡಬಿಡಂಗಿತನಕ್ಕೆ, ಸೊ ಕಾಲ್ಡ್ ತಟಸ್ಥತೆಗೆ ಯಾವುದೇ ಅವಕಾಶವಿರಲಿಲ್ಲ. ಈ ದೇಶವನ್ನು ಕಾಡುತ್ತಿದ್ದ ಸಾಮ್ರಾಜ್ಯಶಾಹಿ ಮತ್ತು ಬ್ರಾಹ್ಮಣಶಾಹಿ ಶಕ್ತಿಗಳನ್ನು ನೇರವಾಗಿ ಎದುರಿಸಿಯೇ ಭಾರತದ ಪತ್ರಿಕೋದ್ಯಮ ನಡೆದುಕೊಂಡುಬಂದಿದೆ ಎಂಬುದಕ್ಕೆ ಮೇಲಿನ ಉದಾಹರಣೆಗಳೇ ಸಾಕ್ಷಿ.

ಸ್ವಾತಂತ್ರ್ಯಾನಂತರದಲ್ಲಿ, ನಮ್ಮ ಕರ್ನಾಟಕದಲ್ಲೇ ನಾವು ಯಾರನ್ನೆಲ್ಲಾ ಇಂದು ಧೀಮಂತ ಪತ್ರಕರ್ತರೆಂದು ಪರಿಗಣಿಸಿದ್ದೇವೆಯೋ, ಯಾರನ್ನೆಲ್ಲಾ ಆದರ್ಶ ಎಂದು ನೋಡುತ್ತೇವೆಯೋ ಅವರೆಲ್ಲರೂ ಅತ್ಯಂತ ಸ್ಪಷ್ಟ ಮತ್ತು ದೃಢವಾದ ಸಿದ್ಧಾಂತಿಗಳೇ ಆಗಿದ್ದರು ಎಂಬುದನ್ನು ಮರೆಯಬಾರದು. ಕರ್ನಾಟಕದ ಪತ್ರಿಕೋದ್ಯಮಕ್ಕೇ ಹೊಸ ಮೆರಗು ತಂದು ಸಂಚಲನ ಮೂಡಿಸಿದ ಪಿ. ಲಂಕೇಶ್ ಅವರು ಕಡಿಮೆ ಸಿದ್ಧಾಂತಿಯೇ? ಸ್ಪಷ್ಟ ಸೈದ್ಧಾಂತಿಕ ತಳಹದಿಯ ಪತ್ರಿಕೋದ್ಯಮವೇ ಅವರ ಆಕ್ಟಿವಿಸಂ ಆಗಿತ್ತು ಮಾತ್ರವಲ್ಲ ಪತ್ರಿಕೋದ್ಯಮದ ಮೂಲಕ ಸಾಮಾಜಿಕ ರಾಜಕೀಯ ಬದಲಾವಣೆಯನ್ನೂ ಮಾಡಲು ಸಾಧ್ಯ ಎಂದು ಪಿ ಲಂಕೇಶ್ ಒಂದು ಮಾದರಿಯನ್ನೇ ಸೃಷ್ಟಿಸಿದರು. ಅದು ಸಾಧ್ಯವಾಗಿದ್ದೇ ಅವರ ಕಟಿಬದ್ಧ ಸೈದ್ಧಾಂತಿಕ ನಿಲುವಿನಿಂದ.

ನಾಡು ಕಂಡ ಮತ್ತೊಬ್ಬ ಧೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿ ಕೂಡಾ ಗಟ್ಟಿ ತಾತ್ವಿಕ ನಿಲುವುಗಳ ಮೂಲಕ ನಾಡಿನ ಜನರನ್ನು ತಲುಪಿದರು. ಇನ್ನು 70-80ರ ದಶಕಗಳಲ್ಲಿ ಭಾರತೀಯ ಪತ್ರಿಕೋದ್ಯಮದ ಧೀಮಂತ ಪರಂಪರೆಯಲ್ಲಿ ಸಾಗಿದ ಹಲವಾರು ಕನ್ನಡ ಪತ್ರಿಕೆಗಳಿದ್ದವು- ಸುದ್ದಿ ಸಂಗಾತಿ, ಶೂದ್ರ, ಪಂಚಮ, ಸಮುದಾಯ, ಸಂಕ್ರಮಣ ಮುಂತಾದ ನಿಯತಕಾಲಿಕೆಗಳು ಕನ್ನಡಿಗರ ಅರಿವಿನ ವಿಸ್ತರಣೆಯಲ್ಲಿ ಕಡಿಮೆ ಕೆಲಸ ಮಾಡಿವೆಯೇ? ಹಾಗಾದರೆ ಇವೆಲ್ಲವೂ ಖಚಿತ ಸೈದ್ದಾಂತಿಕತೆಯಿಂದಲೇ ನಡೆಯಲಿಲ್ಲವೇ?

ಇನ್ನು ಕಳೆದ ಕೆಲವು ದಶಕಗಳಲ್ಲಿ, ಅಗ್ನಿ, ಹಾಯ್ ಬೆಂಗಳೂರು, ಗೌರಿ ಲಂಕೇಶ್ ವಾರಪತ್ರಿಗಳೂ ತಮ್ಮ ಛಾಪು ಮೂಡಿಸಿದವು. ಪಿ ಲಂಕೇಶರ ಸ್ಪೂರ್ತಿಯಲ್ಲೇ ದೊಡ್ಡ ದೊಡ್ಡ ಭ್ರಷ್ಟಾಚಾರ ಪ್ರಕರಣಗಳನ್ನು ಅನಾವರಣಗೊಳಿಸಿದವು. ಇದ್ದುದರಲ್ಲಿ ರವಿ ಬೆಳಗರೆ ಎಡಬಿಡಂಗಿಯಾಗಿ ಕ್ರೈಂ, ಸೆಕ್ಸ್ ಗಳನ್ನ ಅಸ್ತ್ರವಾಗಿಸಿಕೊಂಡು ಟ್ಯಾಬ್ಲಾಯ್ಡ್ ಪತ್ರಿಕೋದ್ಯಮವನ್ನು ಹಳ್ಳ ಹಿಡಿಸಿದರೂ ಹಾಯ್ ಬೆಂಗಳೂರು ಸಹ ಅನೇಕ ಬ್ರಷ್ಟಾಚಾರ ಹಗರಣಗಳನ್ನು ಬಯಲು ಮಾಡಿದ್ದು ಸತ್ಯ.

ಯಾವನ್ನು ನಾವು ದಿನಪತ್ರಿಕೆಗಳು ಅಥವಾ ವೃತ್ತ ಪತ್ರಿಕೆಗಳು ಎನ್ನುತ್ತೇವೆಯೋ ಇವುಗಳ ಆದ್ಯತೆ ದಿನನಿತ್ಯದ ಸುದ್ದಿಗಳನ್ನು ಜನರಿಗೆ ತಲುಪುವುದು ಮಾತ್ರವಾಗಿದ್ದ ಕಾರಣ ಬಹಳ ಪತ್ರಿಕೆಗಳಲ್ಲಿ ಸೈದ್ಧಾಂತಿಕತೆ ದೊಡ್ಡ ವಿಷಯವಾಗಲಿಲ್ಲ. ಆದರೆ ಅಂತಹ ಕಡೆಗಳಲ್ಲಿ ಸಹ ದೊಡ್ಡ ದೊಡ್ಡ ಸಿದ್ಧಾಂತಿಗಳು ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿದ್ದರು ಮತ್ತು ತಮ್ಮ ಖಚಿತ ಅಭಿಪ್ರಾಯಗಳನ್ನು ಆ ವೇದಿಕೆಗಳ ಮೂಲಕ ಜನರಿಗೆ ತಲುಪಿಸುತ್ತಾ ಬಂದಿದ್ದರೆಂಬುದನ್ನು ನಾವು ಮರೆಯಕೂಡದು.

ಈಗ ಹೇಳಿ, ನಮ್ಮ ಪತ್ರಿಕೋದ್ಯಮಕ್ಕೆ ಸಿದ್ಧಾಂತ ಬೇಡವೆ, ಪತ್ರಕರ್ತರಾಗಿರುವವರು ಸೈದ್ಧಾಂತಿಕ ಸ್ಪಷ್ಟತೆ ಹೊಂದಿರಬಾರದೆ? ಆಕ್ಟಿವಿಸ್ಟುಗಳು ಪತ್ರಕರ್ತರಾಗುವುದು ಅಪರಾಧವೆ? ಪತ್ರಿಕೋದ್ಯಮ ಆಕ್ಟಿವಿಸಂಗೆ ಪೂರಕವಾಗಿರಬಾರದೆ? ಇಂದು ಬ್ರಾಹ್ಮಣ್ಯದ ದಿಗ್ವಿಜಯ ಮತ್ತೊಮ್ಮೆ ನಿಜವಾಗುವ ಕರಾಳ ಛಾಯೆ ಇಡೀ ದೇಶವನ್ನು ಆವರಿಸಿಕೊಂಡಿರುವಾಗ, ಬಾಬಾಸಾಹೇಬರು ಎಚ್ಚರಿಸಿದ್ದ ಆ ʼಪ್ರತಿಕ್ರಾಂತಿʼ ತನ್ನ ಕಬಂಧಬಾಹುಗಳನ್ನು ಚಾಚಿಕೊಂಡ ಎಲ್ಲವನ್ನೂ ನೊಣೆಯುತ್ತಿರುವಾಗ, ಅಪರಾಧವೇ ಅಧಿಕಾರವಾಗಿ ದೇಶದ ಪ್ರಮುಖ ಸಂಸ್ಥೆಗಳೆಲ್ಲವನ್ನೂ ನುಂಗಿ ನೀರುಕುಡಿದು ತಮ್ಮ ಅಂಕೆಯಲ್ಲಿ ತಂದುಕೊಂಡು ಇಡೀ ದೇಶದ ಜನರಿಗೆ ಕರಾಳತೆ ದರ್ಶನ ಮಾಡುತ್ತಾ ಭ್ರಷ್ಟಾಚಾರದ ವ್ಯಾಖ್ಯಾನವನ್ನೇ ತಿರುಗುಮರುಗು ಮಾಡುತ್ತಿರುವಾಗ ಸೊ ಕಾಲ್ಡ್ ತಟಸ್ಥತೆಯ ಬದನೇಕಾಯಿಯನ್ನು ನೆಚ್ಚಿಕೊಳ್ಳದೇ ನಿರ್ಧಾರಿತ ಜನಾಂದೋಲನಗಳಿಗೆ ಪೂರಕವಾಗಿ ಪತ್ರಿಕೋದ್ಯಮ ಮತ್ತು ಪತ್ರಕರ್ತರಾದವರು ಜೊತೆಗೂಡುವುದು ಬೇಡವೇ?

‘ಬೇಡ’ ಎಂಬ ಅಭಿಪ್ರಾಯ ನಿಮ್ಮದಾಗಿದ್ದರೆ ನಿಮ್ಮ ಬಳಿ ಹೇಳಲು ನನಗೆ ಏನೂ ಉಳಿದಿಲ್ಲ. ನೀವು ನಿಮ್ಮದೇ ಸುಖಾಸನದಲ್ಲಿ ನೆಮ್ಮದಿಯಾಗಿ ಪವಡಿಸಬಹುದು, ನನಗೇನೂ ಅಭ್ಯಂತರವಿಲ್ಲ. (ಬರಹ- ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪೂನಾ ಒಪ್ಪಂದಕ್ಕೆ 92 ವರ್ಷ

Published

on

  • ಮಲ್ಕುಂಡಿ ಮಹದೇವ ಸ್ವಾಮಿ

ಅಂಬೇಡ್ಕರ್ ಜೀ ನಮ್ಮ ತಂದೆ ‘ಮುಳುಗುತ್ತಿದ್ದಾರೆ’ ಅವರ ಪ್ರಾಣ ಉಳಿಸಿ” ದೇವದಾಸ್ ಗಾಂಧಿ.

“ನನ್ನನ್ನು ಗಲ್ಲಿಗೇರಿಸಿದರೂ ನಂಬಿದ ಜನರ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ” ಡಾ. ಅಂಬೇಡ್ಕರ್.

ಅಂದು ಅಕೋಲದಲ್ಲಿ ಗಾಂಧಿಜೀ ತಂಗಿದ್ದರು. ಅಲ್ಲಿಗೆ ಕೆಲವು ಅಂಬೇಡ್ಕರ್ ಅನುಯಾಯಿಗಳು ಬಂದು ಗಾಂಧಿಯವರನ್ನು ಭೇಟಿಯಾಗಿ, ಕೆಲವು ಪ್ರಶ್ನೆಗಳನ್ನು ಕೇಳಿದರು. “ಗಾಂಧೀಜಿಯವರೇ, ಕೆಲವರು ತಿಲಕರನ್ನು ದೇವರೆಂದು ಪೂಜಿಸುವಂತೆ, ಅಂಬೇಡ್ಕರರನ್ನು ದೇವರೆಂದು ಪೂಜಿಸಬಹುದೇ….? ಗಾಂಧೀಜಿಯವರು ಉತ್ತರಿಸುತ್ತಾ, ಪೂಜಿಸಬಹುದು. ಪೂಜಿಸುವವರಿಗೆ ಈ ಹಕ್ಕಿದೆ. ಅಂಬೇಡ್ಕರರನ್ನು ನಾನು ಮೆಚ್ಚುತ್ತೇನೆ. ನಾನು ಅವರ ದೃಷ್ಟಿಕೋನಗಳಿಂದ ಭಿನ್ನವಾಗಿದ್ದೇನೆ ಆದರೆ ಅವರು ಧೈರ್ಯಶಾಲಿ ಎಂದು ಒಪ್ಪಿಕೊಳ್ಳುತ್ತೇನೆ. ಧೈರ್ಯಶಾಲಿ ಪುರುಷ ಕೂಡ ತಪ್ಪು ಮಾಡುತ್ತಾನೆ. ನಾನು ನನ್ನನ್ನು ಧೈರ್ಯಶಾಲಿ ಎಂದು ಸ್ವತಹ ನಿರ್ಧರಿಸಿಕೊಳ್ಳುತ್ತೇನೆ ಮತ್ತು ನಾನು ಅನೇಕ ತಪ್ಪುಗಳನ್ನು ಮಾಡಿದ್ದೇನೆ ಎಂದು ಒಪ್ಪಿಕೊಳ್ಳುತ್ತೇನೆ” ಎಂದರು.

ತಿಲಕರನ್ನು ದೇವರೆಂದು ಭಾವಿಸಿದ್ದ ಗಾಂಧೀಜಿಗೆ ಪ್ರಶ್ನಿಸಿದ ಅಂಬೇಡ್ಕರ್ ಅನುಯಾಯಿಗಳು ಪೂನಾ ಒಪಂದದಿಂದಾದ ಅನ್ಯಾಯದ ಸಿಟ್ಟನ್ನು ತೋಡಿಕೊಂಡರು. ಮತ್ತು ಈ ಒಪ್ಪಂದ ಇನ್ನು ಮುಂದಿನ ಪೀಳಿಗೆಯೂ ಪ್ರಶ್ನಿಸುವ ಅಧಿಕಾರವನ್ನು ಶಾಶ್ವತವಾಗಿ ಕಿತ್ತುಕೊಂಡಿತು ಎಂಬ ಮತ್ತೊಂದು ಸಿಟ್ಟುಕೂಡ ಅಲ್ಲಡಗಿತ್ತು. ನೀವು ಪ್ರಶ್ನಿಸುವವರಾಗಿದ್ದರೇ ಈ ಪ್ರಸಂಗದ ವಿಶ್ಲೇಷಣೆಯನ್ನು ನಿಮಗೇ ಬಿಡುತ್ತೇನೆ.

ರಾಮ್ಸೆ ಮೆಕ್ ಡೊನಾಲ್ಡ್ ರವರಿಗೆ ಆಗಸ್ಟ್ 18 ಗಾಂಧಿಜೀ ಪತ್ರ ಬರೆದು ಬ್ರಿಟಿಷ್ ರ ಕೋಮುವಾರು ತೀರ್ಪನ್ನು ಕಟುವಾಗಿ ಟೀಕಿಸಿದ್ದರು. ಮತ್ತು ತಮ್ಮ ಅಸಮ್ಮತಿಯನ್ನು ತೋರಿದರು. ಸೆಪ್ಟೆಂಬರ್ 9 ಬ್ರಿಟಿಷರು ಗಾಂಧೀಜಿ ಯವರ ನಿರ್ಧಾರವನ್ನು ನಿರಾಕರಿಸಿದ ಕಾರಣ. ಆ ಸೋಮವಾರ ಎಲ್ಲಾ ನಾಯಕರು ಜಮಾಯಿಸಿ ಅಂಬೇಡ್ಕರರನ್ನು ಕೇಳಿದಾಗ: ” ಗಾಂಧೀಜಿ ಅವರಿಗಾಗಿ ಇಂತಹ ಮಹಾತ್ಯಾಗ ಮಾಡಲಾರೆ ” ಎಂದರು. ಮರುದಿನ ಮಹಾತ್ಮಗಾಂಧಿಜೀಯವರು ಆ ಮಾವಿನ ತೋಪಿನಲ್ಲಿ ಉಪವಾಸಕ್ಕೆ ಕುಳಿತರು.

ಉಪವಾಸದ 3 ದಿನಗಳ ನಂತರ ಅಂಬೇಡ್ಕರ್ ಅವರಿಗೆ ಎಲ್ಲಾ ಕಡೆಯಿಂದ ಬೆದರಿಕೆ ಕರೆಗಳು ಬರಲು ಆರಂಭಿಸಿದವು. ಕೆಲವು ಗೂಂಡಾಗಳು ನೇರವಾಗಿ ಅಂಬೇಡ್ಕರರನ್ನು ಪ್ರಶ್ನಿಸಿದ್ದರು. ಬಹುತೇಕ ಎಲ್ಲ ಪತ್ರಿಕೆಗಳು ಗಾಂಧಿಯವರನ್ನು ಬೆಂಬಲಿಸುತ್ತಿವೆ ಮತ್ತು ಅಂಬೇಡ್ಕರರನ್ನು ವಿರೋಧಿಸುತ್ತಿವೆ. ಅವರ ರಕ್ತದ ಒತ್ತಡ ಹೆಚ್ಚುತ್ತಿದೆ.

ಉದ್ರಿಕ್ತತೆ ಹೆಚ್ಚಾಯಿತು, ಅಂಬೇಡ್ಕರ್ ಖಳನಾಯಕ, ದೇಶದ್ರೋಹಿ, ಭಾರತವನ್ನು ಛಿದ್ರಗೊಳಿಸಲು ಬಯಸಿದ ವ್ಯಕ್ತಿ, ಗಾಂಧಿಯನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದ ವ್ಯಕ್ತಿ. ಟ್ಯಾಗೋರ್, ನೆಹರು ಮತ್ತು ಸಿ. ರಾಜಗೋಪಾಲಾಚಾರಿ ಸೇರಿದಂತೆ ಗರಂ ದಾಲ್ (ಉಗ್ರಗಾಮಿಗಳು) ಹಾಗೂ ನರಮ್ ದಾಲ್ (ಮಿತವಾದಿಗಳು) ರಾಜಕೀಯ ಭಾರೀ ತೂಕ ಗಾಂಧಿಯ ಕಡೆ ತೂಗಿತು. ಆದರೂ ಅಂಬೇಡ್ಕರ್ ರದು ಅದೇಮಾತು.

“ನಾನು ನನ್ನ ಆದ್ಯ ಕರ್ತವ್ಯಕ್ಕೆ ದ್ರೋಹ ಬಗೆಯಲಾರೆ ಮತ್ತು ನನ್ನನ್ನು ಗಲ್ಲಿಗೇರಿಸಿದರೂ ನಂಬಿದ ಜನರ ನ್ಯಾಯಯುತ ಮತ್ತು ನ್ಯಾಯ ಸಮ್ಮತವಾದ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ” ಎಂಬದು. ಅಂಬೇಡ್ಕರ್‌ ರವರ ಈ ಕಾಠಿಣ್ಯ, ಗಾಂಧಿಯವರ ಸ್ವಯಂ ಪ್ರೇರಿತ ಹಠ. ಭಾರತವನ್ನು ಅಂದು ನಿತ್ರಾಣಗೊಳಿಸಿತ್ತು.

ಮಹಾದೇವ ದೇಸಾಯಿ ಹೇಳುವಂತೆ ಸೆಪ್ಟಂಬರ್ 22 ಮಧ್ಯಾಹ್ನ ಅಂಬೇಡ್ಕರ್ ಗಾಂಧಿಯಜೀಯವರನ್ನು ಭೇಟಿಯಾಗಿ, “ನಾನು ನನ್ನ ಸಮುದಾಯಕ್ಕೆ ರಾಜಕೀಯ ಅಧಿಕಾರವನ್ನು ಬಯಸುತ್ತೇನೆ ಅದು ನಮ್ಮ ಉಳಿವಿಗೆ ಅನಿವಾರ್ಯವಾಗಿದೆ” ಉಪವಾಸವನ್ನು ಕೈ ಬಿಡಿ” ಎಂದರು. ಚರ್ಚೆ ಕಗ್ಗಂಟಾಗಿ ಸೆಪ್ಟೆಂಬರ್ 23 ಕ್ಕೆ ಮಾತುಕತೆ ಮುಂದುವರಿಯಿತು. ಮತ್ತೇ 24 ಕ್ಕೆ. ಅಂದು ಸಂಜೆ 5 ಗಂಟೆಗೆ 23 ಜನರು ಒಪ್ಪಂದಕ್ಕೆ ಸಹಿ ಹಾಕಿದ್ದರು. ಈ ವಿಶ್ವಾಸ ಅರ್ಹತೆಗಾಗಿ ರಾಜಾಜಿ ತಮ್ಮ ಒಂದು “ಫೌಂಟೆನ್ ಪೆನ್ನ” ನ್ನು ಅಂಬೇಡ್ಕರ್ ಅವರ ಜತೆ ವಿನಿಮಯ ಮಾಡಿಕೊಂಡಿದ್ದರು. ಇದು ಹೊರಗಿನ ಮರ್ಮಾಘಾತ. ಈ ಒಳಗಿನ ಮರ್ಮಾಘಾತದಬಗ್ಗೆ ಹೇಳಲೇ ಬೇಕು.

ಈ ದಕ್ಷಿಣ ಭಾರತದ ಅಸ್ಪೃಶ್ಯ ರಾಜಕಾರಣಿ
“ಎ ಸಿ ರಾಜನ್” ಅವರು ಅಂಬೇಡ್ಕರ್ ಅವರು ದುಂಡುಮೇಜಿನ ಸಭೆಯಲ್ಲಿ ಚರ್ಚಿಸಲು ಅಸ್ಪೃಶ್ಯರ ಪ್ರತಿನಿಧಿ ಎನ್ನುವುದನ್ನು ನಿರಾಕರಿಸಿದ್ದರು. ಮತ್ತು ಬಾಪೂ ರವರ ಕಡೆ ಕೈ ಎತ್ತಿದ್ದರು. ಪೂನಾ ಒಪ್ಪಂದದ ಬಿಕ್ಕಟ್ಟಿನ ಸಮಯದಲ್ಲಿ ಅಂಬೇಡ್ಕರವರನ್ನು ಪ್ರತ್ಯೇಕೀಕರಿಸಿ ಚರ್ಚೆಮಾಡಲು ಸಿದ್ಧಗೊಂಡಿದ್ದರು.

“ಪಲ್ ವಂಕರ್ ಬಾಲೂ” ದೇಶದ ಮೊದಲ ದಲಿತ ಕ್ರಿಕೆಟಿಗ ಕೂಡ ಅಂಬೇಡ್ಕರವರಿಗೆ 24ವರ್ಷ ದೊಡ್ಡವರಾಗಿದ್ದು ಅಂಬೇಡ್ಕರರ ಸ್ನೇಹ ಜೀವಿಯಾಗಿದ್ದರು. ಆದರೆ ಈ ಸಂದರ್ಭದಲ್ಲಿ ಗಾಂಧೀಜಿಯವರ ಪಾಳಯದಲ್ಲಿ ಪಳಗಿದರು. ಅವರು ಗಾಂಧಿಜೀಯವರ ಅನುಯಾಯಿಗಳಾಗಿ, ಅಂಬೇಡ್ಕರವರ ನಿಲುವುಗಳನ್ನು ಹೆಜ್ಜೆಹೆಜ್ಜೆಗೂ ನಿರಾಕರಿಸಿದರು. ಅಂಬೇಡ್ಕರ್ ಅವರು ಬೌದ್ಧ ಧರ್ಮಕ್ಕೆ ಮತಾಂತರ ವಾಗುವ ವಿಚಾರದಲ್ಲಿಯೂ ಕಠೋರ ವಿರೋಧವನ್ನು ವ್ಯಕ್ತಪಡಿಸಿದ್ದರು. ಮುಂದೆ ಅಂಬೇಡ್ಕರ್ ಅವರ ವಿರುದ್ಧ ಚುನಾವಣೆಗೆ ನಿಂತು ಸೋತದ್ದು ಬೇರೆ ವಿಚಾರ ಆದರೆ ಇಲ್ಲಿ ನಾವು ಅರ್ಥಮಾಡಿಕೊಳ್ಳಬೇಕಾದದ್ದು ಒಂದು ಐತಿಹಾಸಿಕ ಹೋರಾಟದಲ್ಲಿ ಅಂಬೇಡ್ಕರ್ ಅವರ ನಿಲುವು ಮತ್ತು ಕಾಠಿಣ್ಯಗಳನ್ನು.

ಗಾಂಧೀಜಿಯವರ ಪ್ರಕಾರ ಪ್ರತ್ಯೇಕ ಮತದಾನ ಪದ್ಧತಿ ಸಮಸ್ಯೆಯನ್ನು ಉತ್ತಮಕ್ಕಿಂತ ಕೆಟ್ಟದ್ದಾಗಿಸುತ್ತದೆ. ಇದು ಪ್ರತಿ ಹಳ್ಳಿಯಲ್ಲಿ ವಿಭಜನೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಸ್ಥಳಿಯ ಸಂಘರ್ಷಕ್ಕೆ ಕಾರಣವಾಗುತ್ತಿದೆ.ಎಂಬುದು.

1931 ಅ 14 ಅಂಬೇಡ್ಕರವರು ಗಾಂಧಿಯವರನ್ನು ಮೊಟ್ಟ ಮೊದಲನೆ ಬಾರಿಗೆ ಭೇಟಿಯಾಗಿ ಪ್ರತ್ಯೇಕ ಮತದಾನದ ಹಕ್ಕುಗಳ ಬಗ್ಗೆ ಚರ್ಚಿಸಿದ್ದರು. ನಂತರ ಗಾಂಧೀಜಿ ನವೆಂಬರ್ 13 ತಮ್ಮ ಭಾಷಣದಲ್ಲಿ ನಾನು ಪ್ರತ್ತೇಕ ಪ್ರಾತಿನಿಧ್ಯವನ್ನು ವಿರೋಧಿಸುವ ಏಕೈಕ ವ್ಯಕ್ತಿಯಾಗಿದ್ದೇನೆ ಎಂದು ಒಂದು ವರ್ಷದ ಹಿಂದೆಯೇ ಹೇಳಿದ್ದರು. ಈ ಉಪವಾಸ ಒಂದು ವರ್ಷ ಪೂರ್ವ ನಿಯೋಜಿತ ಕಾರ್ಯಕ್ರಮ ದಂತೆ ಕಾಣುತ್ತದೆ ಅಲ್ಲವೆ? ಇದು ಹಠಾತ್ತಾಗಿ ಆಗಿಂದಾಗೆ ಸೃಷ್ಟಿಯಾದ ಯೋಜನೆ ಅಲ್ಲ.

ಇಡೀ ಪೂನಾ ಒಪ್ಪಂದಕ್ಕೆ ಸಾಕ್ಷಿಯಾದ ಘಟನೆಗಳನ್ನಾಧರಿಸಿ ಮಹಾದೇವ ರಾನಡೆ ಹೇಳುವಂತೆ ” ಅವರಿಗೆ ಬೇಕಿರುವುದು ಯಾವುದೋ ಒಂದು ಇತ್ಯಾರ್ಥ; ಅವರು ಆದರ್ಶ ಪರಿಹಾರಕ್ಕಾಗಿ ಕಾಯಲು ಸಿದ್ಧರಿಲ್ಲ. ಗಾಂಧೀಜಿ ಯವರ ಜೀವ ಉಳಿಸುವ ಉತ್ಸಾಹದಲ್ಲಿ ಈ ಸಹಿ ಹಾಕಿದರು.

ಅಂಬೇಡ್ಕರ್ ಜೀ ನಮ್ಮ ತಂದೆ ‘ಮುಳುಗುತ್ತಿದ್ದಾರೆ’ ಅವರ ಪ್ರಾಣ ಉಳಿಸಿ” ಎಂದು ಅಂಬೇಡ್ಕರ್ ರವರ ಮುಂದೆ ಕಣ್ಣೀರುಡುತ್ತದ್ದ ದೇವದಾಸ್ ಗಾಂಧಿ ಅವರ ಮುಖದಲ್ಲಿ ಮಾತ್ರ ಮಂದಹಾಸವಿತ್ತು.

ಹೊ! ಗಾಂಧಿಯವರು ಒಪ್ಪಂದಕ್ಕೆ ಸಹಿ ಹಾಕಿದರಾ?, ಒಂದು ಅಂತಿಮ ಪದ; ಅದು ಗಾಂಧಿಯಲ್ಲ. ಅವರ ಮಗ ದೇವದಾಸ್ ಗಾಂಧಿ.

ಸುಪರ್ಣ ಗುಪ್ತಾ ‘ ಅಂಬೇಡ್ಕರ್ ರವರು ಶೋಷಿತರ ವಿಮೋಚನೆಗಾಗಿ ಹಕ್ಕು ಆಧಾರಿತ ವಿಧಾನಕ್ಕೆ ಆದ್ಯತೆ ನೀಡಿದರು. ಗಾಂಧಿಜೀಯವರು ಅಧ್ಯಾತ್ಮ ಮತ್ತು ನಂಬಿಕೆ ವಿಧಾನಕ್ಕೆ ಮಾನ್ಯತೆ ನೀಡಿದರು. ಅಂಬೇಡ್ಕರರಿಗಿಂತ ಭಿನ್ನವಾಗಿ ಶೋಷಕರ ಮನಸ್ಥಿತಿಯನ್ನು ಬದಲಾಯಿಸಿದಾಗ ಮಾತ್ರ, ಯಾವುದೇ ಶೋಷಣೆಯನ್ನು ಸರಿಪಡಿಸಬಹುದು ಎಂದು ಗಾಂಧಿಜೀ ಭಾವಿಸಿದ್ದರು’. ಎನ್ನುತ್ತಾರೆ. ಇದು ಈ ನೆಲದಲ್ಲಿ ಅಸಂಭವ. ಕಾರಣ ಇಲ್ಲಿನ ಜಾತಿ ವ್ಯವಸ್ಥೆ ಒಂದು ಮಾನಸಿಕ ಸ್ಥಿತಿಯಾಗಿದೆ. ಅದು ಸಾವಿರಾರು ವರ್ಷಗಳು ತನ್ನ ಬೇರನ್ನು ತಾನೇ, ತನ್ನ ಮೆದುಳಿಗೆ ಎಣೆದುಕೊಂಡಿದೆ. ಇದನ್ನು ನಂಬಿಕೆ ಮಾತ್ರದಿಂದಲೇ ಬಿಡಿಸುವುದು ಕಷ್ಟ.

ಈ ಸತ್ಯ ಗಾಂಧೀಜಿಯವರ ಅರಿವಿಗೆ ಬಂದಿದ್ದೆ ಅವರು
ಅಸ್ಪೃಶ್ಯತೆಯ ವಿರುದ್ದ 1933 ನವೆಂಬರ್ ನಿಂದ 1934 ರ ಆಗಸ್ಟ್ ವರೆಗೆ 12500 km ಭಾರತದಾದ್ಯಂತ ಪ್ರವಾಸ ಕೈಗೊಂಡಾಗ. 800000 ಗಳನ್ನು ಹರಿಜನ ನಿಧಿಗೆ ಸಂಗ್ರಹಿಸಲು ಮೇಲ್ವರ್ಗದ ಜನರ ಬಳಿ ತೆರಳಿದಾಗ. ಕೊನೆ ಕೊನೆಗೆ ಶ್ರೀರಂಗಂ ತಂಜಾವೂರಿನ ಇತರ ದೇವಾಲಯಗಳಲ್ಲಿ ಅಸ್ಪೃಶ್ಯತಾಚರಣೆಯನ್ನು ಮನಗಂಡು ತಾವೇ ದೇವಾಲಗಳಿಗೇ ಹೋಗುವುದನ್ನು ನಿಷೇಧಿಸಿಕೊಂಡಾಗ. ಹರಿಜನ ಸೇವಕ ಸಂಘ ಹರಿಜನ ಪತ್ರಿಕೆ ಇಲ್ಲಿ ಹುಟ್ಟಿಕೊಂಡವು. ಪ್ರತಿ ಹಳ್ಳಿಗಳಲ್ಲಿ ರಾಮಮಂದಿರ ಭಜನೆಗಳು ಆರಂಭವಾದವು. ಇದು
ಈಗ ಈ ಜನರ ಬದುಕಿನ ಭಾಗವಾಗಿ ಬಿಟ್ಟಿದೆ.

ಲೂಯಿ ಫಿಷರ್ “ಗಾಂಧೀಜಿಗೆ ದ್ವೇಷ, ಅಸೂಯೆ, ವಿಷ, ಅಸಮಧಾನವಿಲ್ಲ. ಅವರನ್ನು ಜೈಲಿಗೆ ಹಾಕಿದ ವೈಸ್ ರಾಯ್ ಗಳ ಜೊತೆ ಅವರು ಸ್ನೇಹಿತರಾಗಿದ್ದರು. ಅವರು ವ್ಯವಸ್ಥೆಯನ್ನು ವಿರೋಧಿಸಿದರು ಆದರೆ ವ್ಯಕ್ತಿಯನ್ನಲ್ಲಾ.
ಎಂದು ಯಾರು ಏನೇ ಹೇಳಿದರು,
ಅಂಬೇಡ್ಕರ್ ಅವರು ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಗಾಂಧೀಜಿಯವರನ್ನು ನಾನು “ಮಹಾತ್ಮ” ಎಂದು ಒಪ್ಪಲಾರೆ ಎಂದರು.

ಅಂಬೇಡ್ಕರ್ ರ ಈ ನೋವಿಗೆ ಪಟೇಲರ ಈ ಮಾತನಲ್ಲಿ ಉತ್ತರ ಸಿಗಬಹುದೇನೊ ಪಟೇಲರು “ಈ ಗಾಂಧಿಜೀ ಏಕೆ ಉಪವಾಸ ಮಾಡುತ್ತಿದ್ದಾರೆ ?” ಎಂದು ಗೊಂದಲಕ್ಕೀಡಾದರು. ಎದುರಿನಲ್ಲಿದ್ದವರು “ಅಸ್ಪೃಶ್ಯರನ್ನು ಎದುರಿಸಲು ಇನ್ಯಾವುದೇ ಮಾರ್ಗಗಳಿಲ್ಲವಲ್ಲಾ ಆ ಕಾರಣಕ್ಕಿರಬಹುದೇನೊ…? ಎಂದರು.

ಕೊನೆಯದಾಗಿ ಈ ಮಾತು

ನನ್ನನ್ನು ಗಲ್ಲಿಗೇರಿಸಿದರೂ ನಂಬಿದ ಜನರ ವಿಶ್ವಾಸ ಕ್ಕೆ ದ್ರೋಹ ಮಾಡುವುದಿಲ್ಲ” ಎಂದರಲ್ಲಾ ಡಾ. ಅಂಬೇಡ್ಕರ್ ಈ ಎಳೆಯನ್ನು ಇಡಿದು ಈ ಪೀಳಿಗೆ ಯಾಕೆ ಬದುಕುವ ಪ್ರಯತ್ನ ಮಾಡುತ್ತಿಲ್ಲಾ….? (ಬರಹ-ಮಲ್ಕುಂಡಿ ಮಹದೇವ ಸ್ವಾಮಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮುಹಮ್ಮದ್ ಎಂಬ ಮಹೋನ್ನತ ಮಾದರಿ

Published

on

  • ಯೋಗೇಶ್ ಮಾಸ್ಟರ್

ನುಷ್ಯನ ಎಲ್ಲಾ ವ್ಯವಹಾರಗಳೂ ನಡೆಯುವುದು ಅವನ ಮನಸ್ಸಿನ ಮೂಲಕ. ಮಾಡುವಂತಹ ಆಲೋಚನೆಗಳು, ತೆಗೆದುಕೊಳ್ಳುವಂತಹ ನಿರ್ಧಾರಗಳು, ತೋರುವಂತಹ ವರ್ತನೆಗಳು, ವ್ಯಕ್ತಿಯ ಬಲ, ದೌರ್ಬಲ್ಯ, ಸನ್ನಡತೆ, ದುರ್ನಡತೆ; ಮನುಷ್ಯನದ್ದು ಏನೆಂದು ಹೇಳುತ್ತಾ ಬೆರಳು ತೋರಿಸುವಿರೋ ಅವೆಲ್ಲವೂ ಮನಸ್ಸಿನ ವಿಷಯಗಳಷ್ಟೇ ಆಗಿವೆ. ವ್ಯಕ್ತಿ ಎಂಬುವನು ಆ ಮನಸ್ಸಿನ ಕರಣ, ವರ್ತನೆ ಎನ್ನುವುದು ಆ ಮನಸ್ಸಿನ ಗುಣದ ಪ್ರದರ್ಶನ.

ಮನುಷ್ಯ ತನ್ನ ಮನಸ್ಸಿನ ವೈಪರಿತ್ಯದಿಂದಾಗಿ ತನ್ನ ನಡವಳಿಕೆಯಲ್ಲಿ ತೋರುವ ಎಲ್ಲಾ ವ್ಯವಹಾರಗಳನ್ನು ಮನಗಂಡ ಮುಹಮ್ಮದರು ಅದನ್ನು ತಹಬಂದಿಗೆ ತರಲೆಂದೇ ನೈತಿಕ ತರಬೇತಿಗೆ ತೀವ್ರ ಗಮನ ನೀಡಿದರು. ವ್ಯಕ್ತಿಯೊಬ್ಬನು ವ್ಯಕ್ತಿಗತವಾಗಿಯಾಗಲಿ, ಸಮೂಹದೊಡನೆಯಾದರೂ ಆಗಲಿ, ತನ್ನನ್ನು ತಾನು ಘಾಸಿಗೊಳಿಸಿಕೊಳ್ಳಕೂಡದು ಮತ್ತು ಮತ್ತೊಬ್ಬರನ್ನು ಘಾಸಿಗೊಳಿಸಕೂಡದು; ಇದು ನೈತಿಕ ಹೊಣೆಗಾರಿಕೆ.

ವ್ಯಕ್ತಿ ಮತ್ತೊಬ್ಬ ವ್ಯಕ್ತಿಯ ಮೇಲಾಗಲಿ, ಸಮೂಹವು ಮತ್ತೊಂದು ಸಮೂಹದ ಮೇಲಾಗಲಿ ಆಕ್ರಮಿಸುವುದೆಂದರೆ ನೈತಿಕ ಪರಿಧಿಯೊಳಗೆ ಅತಿಕ್ರಮಿಸುವುದೆಂದೇ ಅರ್ಥ. ಈ ಆಕ್ರಮಣ ಮತ್ತು ಅತಿಕ್ರಮಣಗಳಿಗೆ ಕಾರಣವೇನು?

ಆಸೆಯಿಂದಾಗಿಯೇ ಅಹಂಕಾರ, ಭಯದಿಂದಾಗಿಯೇ ಆಕ್ರಮಣ. ಆಸೆ ಮತ್ತು ಭಯವೆಂಬ ಎರಡು ತೀವ್ರವಾದ ವಿಷಯಗಳು ಮನುಷ್ಯನಲ್ಲಿ ಸೈತಾನರನ್ನು ಆಮಂತ್ರಿಸುತ್ತವೆ. ಸೈತಾನನೆಂದರೆ ದೆವ್ವವೋ, ಭೂತವೋ, ಪ್ರೇತವೋ ಅಲ್ಲ. ನಮ್ಮ ಮನಸ್ಸನ್ನು ಪ್ರಭಾವಿಸಿ ಅಥವಾ ಪುಸಲಾಯಿಸಿ ನಮ್ಮಿಂದ ಕೆಲಸ ಮಾಡಿಸುವ ನಮ್ಮೊಳಗಿನ ಮತ್ತು ಹೊರಗಿನ ಪ್ರಲೋಭನಾ ಪ್ರಭಾವಗಳ ಪ್ರತಿಮಾ ರೂಪಕ.

ಇಂತಹ ಸೈತಾನನ ಪ್ರಭಾವಗಳು ಆಲೋಚಿಸುವ, ಭಾವಿಸುವ ಮನಸ್ಸಿನ ಮೂಲಕವೇ ಕೆಲಸ ಮಾಡುವುದರಿಂದ ಸೈತಾನನ ಚಟುವಟಿಕೆಗಳನ್ನು ನಮ್ಮವೇ ಎಂದು ವ್ಯಕ್ತಿ ಭಾವಿಸುತ್ತಾನೆ. ಹಾಗಾಗಿ ಸೈತಾನನ ಎಲ್ಲಾ ಪ್ರಭಾವ ಮತ್ತು ಚಟುವಟಿಕೆಗಳನ್ನು ಸಮರ್ಥಿಸುವ ಸಲುವಾಗಿ ತನ್ನ ಮನಸ್ಥಿತಿ ಮತ್ತು ಪರಿಸ್ಥಿತಿಯನ್ನು ಉಪಯೋಗಿಸಿಕೊಳ್ಳುವನು.

ಸರಿ, ಈ ವ್ಯಕ್ತಿಯ ಚೈತನ್ಯವನ್ನು ಜೀವ ಅಥವಾ ವ್ಯಕ್ತಿಗತವಾದ ಅಸ್ತಿತ್ವ ಎನ್ನುವುದಾದರೆ, ಮಹಾ ಅಸ್ತಿತ್ವವೊಂದಿದೆ. ಇದು ಆತ್ಮವಾದರೆ, ಅದು ಪರಮಾತ್ಮ. ಇಹದಲ್ಲಿ ಇರುವ ಇದರ ಆಲೋಚನೆಗಳು ಮತ್ತು ಕಾರ್ಯ ಸಾಮರ್ಥ್ಯ ಸೀಮಿತ ಮತ್ತು ಪ್ರಭಾವಿತ. ಆದರೆ ಪರವಾಗಿರುವ, ಇಹದ ಅಳತೆಗೆ ಎಟುಕದ ಅದರ ಸಾಮರ್ಥ್ಯ ಅಮಿತ ಮತ್ತು ಅನಂತ.
ಅಂತಹ ಮಹಾ ಅಸ್ತಿತ್ವವನ್ನೇ ಈಶ್ವರ ಎನ್ನುವರೋ, ಅಲ್ಲಾಹ್ ಎನ್ನುವರೋ, ಬ್ರಹ್ಮನ್ ಎನ್ನುವರೋ, ಲಿಂಗ ಎನ್ನುವರೋ, ಪರಮಪಿತ ಎನ್ನುವರೋ, ಪರಮಾತ್ಮ ಎನ್ನುವರೋ; ಒಟ್ಟಿನಲ್ಲಿ ಭಾಷೆ ಯಾವುದಾದರೂ ಸೃಷ್ಟಿಕರ್ತ ಎಂದು ಕರೆಯಲ್ಪಡುವ ಆ ಮಹೋನ್ನತ ಚೈತನ್ಯಕ್ಕೆ ಶರಣಾಗಿ ಆ ಮಹಾಕಾಶದ ಇಚ್ಛೆಯಂತೆ ನಡೆಯುವ, ಆತನ ಇಚ್ಛೆಗಳನ್ನು ತಮ್ಮ ಮೂಲಕ ನೆರವೇರಿಸುವ ಮಾನವನ ಕರ್ತವ್ಯಕ್ಕೆ ಬೇಕಾದ ನೈತಿಕತೆ, ಆಧ್ಯಾತ್ಮಕತೆ ಮತ್ತು ತಾತ್ವಿಕತೆಯ ಸಾಕ್ಷಾತ್ಕಾರಕ್ಕೆ ಪ್ರವಾದಿ ಮುಹಮ್ಮದರು ಮಹೋನ್ನತ ಮಾದರಿಯಾಗಿ ತಮ್ಮ ಜೀವನ ಮತ್ತು ಸಂದೇಶವನ್ನು ಮುಂದಿರಿಸುತ್ತಾರೆ.

ಮಹಾಸ್ತಿತ್ವಕ್ಕೆ ಶರಣಾಗಿ ತನ್ನ ಸೀಮಿತ ಇತಿ ಮಿತಿಯ ಮಾನಸಿಕ ಲೆಕ್ಕಾಚಾರಗಳಿಂದ ಹೊರಗಿನ ನೇಮವನ್ನು ಸ್ವೀಕರಿಸುವುದೇ ಮುಹಮ್ಮದರ ಪಾಲಿನ ಮಹೋನ್ನತ ನೈತಿಕತೆ. ಅದನ್ನು ತಮ್ಮ ಆಲೋಚನೆ, ನಡವಳಿಕೆ ಮತ್ತು ಬದುಕು ಹಾಗೂ ಬೋಧನೆಗಳ ಮೂಲಕ ತೋರುವ ಮುಹಮ್ಮದ್ ನಿಸ್ಸಂಶಯವಾಗಿ ಅಚ್ಚರಿಯ ಒಂದು ಮಹೋನ್ನತ ಮಾದರಿ. ಯಾರೊಬ್ಬರು ಮುಸಲ್ಮಾನರಾಗಿರಲಿ, ಅಲ್ಲದಿರಲಿ; ಯಾರೊಬ್ಬರ ಬದುಕಿನ ನೈತಿಕತೆಯ ಗುಣಮಟ್ಟವನ್ನು ಉತ್ತಮಗೊಳಿಸಿಕೊಳ್ಳಲು ಅವರ ಜೀವನದ ಸಂಗತಿಗಳ ಅಧ್ಯಯನ ಮತ್ತು ಅವರು ಹೇಳುವ ಮಾತುಗಳ ಸಾಂದರ್ಭಿಕ ಸ್ಮರಣೆಗಳು ತಾತ್ವಿಕ ಊರುಗೋಲಾಗುತ್ತವೆ. ಮುಹಮ್ಮದರನ್ನು ಮುಸಲ್ಮಾನರಿಗೆ ಮತ್ತು ಇಸ್ಲಾಮಿಗೆ ಮಾತ್ರ ಸೀಮಿತಗೊಳಿಸಿನೋಡುವುದು ಅವರ ವ್ಯಕ್ತಿತ್ವ ಅಧ್ಯಯನಕ್ಕೆ ಚ್ಯುತಿ.

ಪಾರದರ್ಶಕವಾದ ನಿಷ್ಕಳಂಕ ಮತ್ತು ಪರಿಪೂರ್ಣ ವ್ಯಕ್ತಿತ್ವದ ಮಾದರಿ ಅವರದು. ವಿನಯಶೀಲತೆ, ಸಮಚಿತ್ತತೆ, ಪೂರ್ಣಪ್ರಜ್ಞೆ, ಕ್ಷಮಾಗುಣ, ಸಹನೆ, ಔದಾರ್ಯ, ನ್ಯಾಯಸಮ್ಮತ, ಪ್ರಾಮಾಣಿಕತೆ ಮತ್ತು ಸಂಪೂರ್ಣ ಸ್ವಾರ್ಥರಹಿತ ಜೀವನದ ನಿದರ್ಶನಗಳೇ ಅವರ ಬದುಕು ಮತ್ತು ಬೋಧನೆಗಳಲ್ಲಿ ಅನಾವರಣಗೊಳ್ಳುವುದು.

ಅಧ್ಯಯನದ ಮೂಲಕ ಅವರನ್ನು ಅರಿತಿರುವಾಗ, ನಮ್ಮ ಬದುಕಿನ ಯಾವುದೇ ಹಂತದಲ್ಲಿ, ಹೆಜ್ಜೆಯಲ್ಲಿ, ಪ್ರಸಂಗಗಳಲ್ಲಿ “ಈ ಸಮಯದಲ್ಲಿ, ಈ ಸಂದರ್ಭಕ್ಕೆ ಪ್ರವಾದಿ ಮುಹಮ್ಮದರು ಮಾದರಿ ಅಥವಾ ಬೋಧನೆ ಹೇಗೆ ಅನ್ವಯಿಸಿಕೊಳ್ಳಬಹುದು” ಎಂಬ ಆಲೋಚನೆಯೇ ಸಾಕು, ನಮ್ಮ ಗುಣಮಟ್ಟದ ನಿರ್ವಹಣೆಯನ್ನು ಅಲ್ಲಿ ಎದುರು ನೋಡಲು ಸಾಧ್ಯ. ಅತಿಕ್ರಮಣವಲ್ಲದ ಮೃದು ಸಾಮಿಪ್ಯದ, ನಸುನಗೆಯ ಮುಹಮ್ಮದರು ಎದೆಯಲ್ಲಿ ಸದಾ ಜೀವಂತ.
ಪ್ರವಾದಿ ಮುಹಮ್ಮದ್ ಅವರ ಸಂಗಾತಿಗಳು ದಾಖಲಿಸಿರುವಂತೆ, ಅವರ ಜೊತೆಗಾರರ ಜೊತೆಯಲ್ಲಿರುವಾಗಲೂ ಕೂಡಾ ಕಾಲನ್ನು ಚಾಚಿ ಕುಳಿತುಕೊಳ್ಳುತ್ತಿರಲಿಲ್ಲ. ಯಾರಿಗೇ ಹಸ್ತಲಾಘವಕ್ಕೆ ಕೊಟ್ಟ ಕೈಯನ್ನು ತಾವೇ ಮೊದಲಾಗಿ ಎಳೆದುಕೊಳ್ಳುತ್ತಿರಲಿಲ್ಲ.

ಮಕ್ಕಾದ ಮೇಲಿನ ವಿಜಯದ ತರುವಾಯ ಮುಹಮ್ಮದರು ನಗರವನ್ನು ಪ್ರವೇಶಿಸುವಾಗ ಒಂಟೆಯ ಮೇಲೆ ಕುಳಿತಿದ್ದ ಅವರು ಅಲ್ಲಾಹನಿಗೆ ಕೃತಜ್ಞತಾ ಪೂರ್ವಕವಾಗಿ ತಲೆಯನ್ನು ತಗ್ಗಿಸಿದ್ದ ಅವರು ಅದೆಷ್ಟು ಬಾಗಿದ್ದರೆಂದರೆ, ಒಂಟೆಯ ಕುತ್ತಿಗೆಯ ಹಿಂಬದಿಯನ್ನು ತಗಲುವಷ್ಟು! ವ್ಯಕ್ತಿಗತವಾದ ಅಹಂಕಾರದ ಕಾರಣಕ್ಕಾಗಿ ಎಂದಿಗೂ, ಯಾರ ಮೇಲೂ ಅದೆಷ್ಟೇ ಸಮಸ್ಯೆಗಳನ್ನು ಕೊಟ್ಟಿದ್ದರೂ ಸೇಡು ತೀರಿಸಿಕೊಳ್ಳುವ ಕಿಂಚಿತ್ತೂ ಧೋರಣೆ ಹೊಂದಿರಲಿಲ್ಲ ಮತ್ತು ‘ನಾನು’ ಎಂದ ಅಹಂಭಾವಕ್ಕೆ ಎಲ್ಲಿಯೂ ಆಸ್ಪದವನ್ನೇ ಕೊಡಲಿಲ್ಲ. ತಮ್ಮೆಲ್ಲಾ ಕೆಲಸ, ವರ್ತನೆ ಮತ್ತು ವ್ಯವಹಾರಗಳಲ್ಲಿ ನ್ಯಾಯ ಮತ್ತು ಪ್ರಾಮಾಣಿಕತೆಯನ್ನು ಕಿಂಚಿತ್ತೂ ಬಿಟ್ಟುಕೊಡಲಿಲ್ಲ.

ಕುಲೀನ ಮನೆತನದ ಹೆಣ್ಣುಮಗಳೊಬ್ಬಳು ಕಳ್ಳತನದ ಅಪರಾಧದಲ್ಲಿ ಶಿಕ್ಷೆಅನುಭವಿಸಬೇಕಾಗಿ ಬಂದಾಗ, “ನಮ್ಮ ಮಗಳು ಫಾತೀಮಾ ಆಗಿದ್ದರೂ ಕೂಡಾ ಇದೇ ಕಾನೂನಿನ ಕ್ರಮವನ್ನು ಎದುರಿಸಬೇಕಿತ್ತು” ಎನ್ನುವರು ಪ್ರವಾದಿ ಮುಹಮ್ಮದರು. ಅದು ಸಮಾಜದ ನೈತಿಕ ವ್ಯವಸ್ಥೆಯ ವಿಷಯದಲ್ಲಿ. ಆದರೆ ಅದೇ ತಮ್ಮ ವಿಷಯಕ್ಕೆ ಬಂದಾಗ ಶತ್ರುಗಳನ್ನು ತಾವು ಕ್ಷಮಿಸಿಬಿಡುತ್ತಿದ್ದರು. ತಮ್ಮನ್ನು ಮತ್ತು ತಮ್ಮ ಅನುಯಾಯಿಗಳನ್ನು ಸತತವಾಗಿ ಕಿರುಕುಳಕೊಡುತ್ತಿದ್ದವರನ್ನೂ ಮೆಕ್ಕಾದ ವಿಜಯದ ನಂತರ ಕ್ಷಮಿಸಿದ್ದರು.

ಅವರ ಅನುಯಾಯಿಗಳು ತಮ್ಮನ್ನು ಆರಾಧಿಸುವಂತಹ ವಿಷಯಕ್ಕೆ ಎಂದಿಗೂ ಆಸ್ಪದವನ್ನು ಕೊಡಲಿಲ್ಲ. ಅಲ್ಲಾಹನಿಗೆ ಮಾತ್ರ ಆರಾಧನೆಯು ಮೀಸಲು ಎಂದ ಅವರು ಹೇಳುತ್ತಿದ್ದದ್ದು, “ನಾನು ಅಲ್ಲಾಹನ ಬರೀ ಸೇವಕನೊಬ್ಬ.” ತಮ್ಮನ್ನು ತಾವು ಗುರುತಿಸಿಕೊಂಡಿದ್ದು ದೇವತಾ ಮನುಷ್ಯನಾಗಿ ಅಲ್ಲ. ಬರಿಯ ಮಾರ್ಗದರ್ಶಕ, ಅಲ್ಲಾಹನ ಸಂದೇಶ ವಾಹಕ.
“ಮಾನವರೇ, ನಾನು ನಿಮ್ಮೆಲ್ಲರ ಪಾಲಿಗೆ ಅಲ್ಲಾಹನ ದೂತನಾಗಿರುವೆನು. ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅವನಿಗೆ ಸೇರಿದೆ. ಅವನ ಹೊರತು ಬೇರೆ ದೇವರಿಲ್ಲ. ಅವನೇ ಜೀವಂತಗೊಳಿಸುವವನು ಮತ್ತು ಮರಣ ನೀಡುವವನು. ನೀವೀಗ ಅಲ್ಲಾಹನಲ್ಲೂ ಆತನ ದೂತನಲ್ಲೂ ನಂಬಿಕೆ ಇಡಿರಿ. ಅವರು ನಿರಕ್ಷರಿ ಪ್ರವಾದಿಯಾಗಿದ್ದು, ಅಲ್ಲಾಹನಲ್ಲಿ ಹಾಗೂ ಅವನ ವಚನಗಳಲ್ಲಿ ನಂಬಿಕೆ ಉಳ್ಳವರಾಗಿದ್ದಾರೆ. ಮಾರ್ಗದರ್ಶನ ಪಡೆಯಲಿಕ್ಕಾಗಿ ನೀವು ಅವರನ್ನು ಅನುಸರಿಸಿ.” (ಕು: 7/158)

ಮನುಷ್ಯನ ಹೊರತು ನೈಸರ್ಗಿಕವಾಗಿರುವ ಉಳಿದೆಲ್ಲಾ ಜೀವಿಗಳು ಸಹಜವಾಗಿಯೇ ಇರುತ್ತವೆ. ಆದರೆ ಮನುಷ್ಯನೊಬ್ಬನಿಗೆ ಮಾತ್ರ ಮನಸ್ಸು ಎಂಬುವುದಿದ್ದು, ಅದು ಆಲೋಚನೆ ಎಂಬುದನ್ನು ಮಾಡಿ, ವಿಷಯಗಳನ್ನು ಮತ್ತು ಪ್ರಸಂಗಗಳನ್ನು ವಿಶ್ಲೇಷಿಸುವ ಮತ್ತು ವಿವೇಚಿಸುವ ಸಾಮರ್ಥ್ಯವನ್ನು ಹೊಂದಿದ್ದಾನೆ. ಇದರಿಂದಾಗಿಯೇ ತನ್ನ ಇಷ್ಟಕ್ಕೆ ತಕ್ಕಂತೆ, ತನ್ನ ಅನುಕೂಲಕ್ಕೆ ತಕ್ಕಂತೆ, ತನ್ನ ಸ್ವಾರ್ಥ ಮತ್ತು ಅಹಂಕಾರಕ್ಕೆ ತಕ್ಕಂತೆ ವಿವೇಚಿಸುತ್ತಾ ಇಡೀ ವಿಶ್ವದ ವಿದ್ಯಮಾನಗಳನ್ನೇ ವಿವರಿಸುತ್ತಾನೆ. ಹೃದಯ ಮತ್ತು ದೇಹಗಳು ಪ್ರಕೃತಿ ಸಹಜವಾಗಿದ್ದರೆ, ಮನಸ್ಸು ಮಾತ್ರ ಕೃತಕತೆಯನ್ನು ಸೃಷ್ಟಿಸುತ್ತದೆ. ಕೃತಕತೆ ಎಂಬುದು ನೈಸರ್ಗಿಕವಲ್ಲದೇ ಇರುವ ಕಾರಣದಿಂದ ವ್ಯಕ್ತಿಯಿಂದ ವ್ಯಕ್ತಿಗೆ, ಸಮೂಹದಿಂದ ಸಮೂಹಕ್ಕೆ ಬದಲಾಗುತ್ತಾ ಹೋಗಿ ಸಂಘರ್ಷಕ್ಕೆ, ದೌರ್ಜನ್ಯಕ್ಕೆ ಮತ್ತು ಹುಸಿ ವಿದ್ಯಮಾನಗಳಿಗೆ ಕಾರಣವಾಗುತ್ತದೆ. ಯಾವ ವಿಷಯಗಳು ಮನಸ್ಸಿನ ಸೃಷ್ಟಿಯಾಗಿರುತ್ತವೆಯೋ ಅವುಗಳೆಲ್ಲವೂ ಕೂಡಾ ಕೃತಕತೆಯನ್ನು ಹೊಂದಿರುವ ಸಾಧ್ಯತೆಯೇ ಅತಿ ಹೆಚ್ಚು. ಹಾಗಿರುವಾಗ ಇಡೀ ವಿಶ್ವದ ಪ್ರಕೃತಿಯ ಸೃಷ್ಟಿಯ ಕಾರಣ ಅಂದರೆ ದೇವರು ಈ ವೈಪರಿತ್ಯವನ್ನು ಸಹಿಸಲಾಗದು. ತಾತ್ವಿಕ ಮತ್ತು ಆಧ್ಯಾತ್ಮಿಕ ವಿವರಣೆಯಂತೆ ಪ್ರವಾದಿಗಳ ಬಹು ದೊಡ್ಡ ಹೊಣೆಗಾರಿಕೆಯೆಂದರೇನೇ ದೇವರ ದೃಷ್ಟಿಯಂತೆ, ಅವನ ಇಚ್ಛೆಯಂತೆ ಮನುಷ್ಯನೂ ಕೂಡಾ ಬಾಳುವುದು. ಅದಕ್ಕಾಗಿ ಅವನನ್ನು ಕ್ರಮಕ್ಕೊಳಪಡಿಸಲು ನೈತಿಕ ಮತ್ತು ತಾತ್ವಿಕ ಕರಣಗಳಿವೆ.

ಅದರಂತೆಯೇ ಪ್ರವಾದಿ ಮುಹಮ್ಮದರೂ ಕೂಡಾ ಮನುಷ್ಯನ ನಡವಳಿಕೆ, ಬದುಕುವ ರೀತಿ ಮತ್ತು ತನ್ನನ್ನು ತಾನು ಹಾಗೂ ಇತರ ಜೀವಿಗಳನ್ನು ನೋಡುವ ರೀತಿ; ಎಲ್ಲವೂ ಅಲ್ಲಾಹನು ಬಯಸುವ ರೀತಿಯದ್ದಾಗಿರಲಿ ಎಂದು ತಾವೇ ಒಂದು ಸುಂದರ ಮಾದರಿಯಾಗಿ ತೋರಿದರು.

ಖಂಡಿತವಾಗಿಯೂ ಅಲ್ಲಾಹನ ದೂತರಲ್ಲಿ ನಿಮಗೆ ಅತ್ಯುತ್ತಮ ಆದರ್ಶವಿದೆ. ಅಲ್ಲಾಹನ ಕುರಿತು ಮತ್ತು ಆ ಅಂತಿಮದಿನದ ಕುರಿತು ಶುಭ ನಿರೀಕ್ಷೆ ಉಳ್ಳವರಿಗೆ ಮತ್ತು ಅಲ್ಲಾಹುವನ್ನು ಪದೇ ಪದೇ ಸ್ಮರಿಸುವವರಿಗೆ (ಇದು ಅನ್ವಯಿಸುತ್ತದೆ.) (ಕು: 33.21)

ಹಾಗಾಗಿಯೇ ಇಸ್ಲಾಮ್ ಒಂದು ಮಾರ್ಗ. ಅಲ್ಲಾಹನು ಇಚ್ಛಿಸುವ ಗುರಿಯನ್ನು ಮುಟ್ಟಲು ಒಂದು ಅನುಗ್ರಹಿತ ಮಾರ್ಗ. ಹಾಗಾಗಿಯೇ ಮತ್ತೆ ಮತ್ತೆ ನಾವು ನೆನಪಿಸಿಕೊಳ್ಳಬೇಕಾಗಿರುವುದು ಮುಹಮ್ಮದರು ಬರಿಯ ಮುಸ್ಲೀಮರಿಗಲ್ಲ, ಎಲ್ಲರಿಗೂ.
ಕುರಾನ್ ಒಂದು ಮಾರ್ಗದರ್ಶಿ ಕೈಪಿಡಿ. ಅನುಗ್ರಹಿತ ಮಾರ್ಗದಲ್ಲಿ ನಡೆಯಲು ಮಾಡಬೇಕಾದ ಕೆಲಸಗಳು, ತೆಗೆದುಕೊಳ್ಳಬೇಕಾದ ನಿರ್ಧಾರಗಳು, ರೂಢಿಸಿಕೊಳ್ಳಬೇಕಾದ ಅಭ್ಯಾಸಗಳು, ತಳೆಯ ಬೇಕಾದ ನಿಲುವುಗಳು, ಸತ್ಯ ಮತ್ತು ಮಿಥ್ಯಗಳನ್ನು ಬೇರ್ಪಡಿಸಿ ನೋಡುವ ವಿವೇಕಗಳು, ಹಿಂದೆ ಸಾಧಿಸಿದವರ ಉದಾಹರಣೆಗಳು, ಎಡವಿರುವವರ ವೈಫಲ್ಯಗಳು, ಸಾಧಿಸಿರುವವರ ದೃಷ್ಟಾಂತಗಳು, ಪ್ರಕೃತಿಯಿಂದ, ಕೀಟ ಮತ್ತು ಪ್ರಾಣಿಗಳ ಮಾದರಿಗಳು; ಎಲ್ಲವನ್ನೂ ಪ್ರವಾದಿ ಮುಹಮ್ಮದರು ಕ್ರೋಢೀಕರಿಸಿದ್ದಾರೆ. ಯಾವುದೇ ಒಬ್ಬ ಮನುಷ್ಯ ತನ್ನ ಮನೆಯಲ್ಲಿ, ಸಮಾಜದಲ್ಲಿ, ಆರ್ಥಿಕ ಮತ್ತು ರಾಜಕೀಯ ನಿಲುವುಗಳಲ್ಲಿ ಹೇಗಿರಬೇಕು, ಹೇಗಿರಬಾರದು ಎಂಬುದರ ಸ್ಪಷ್ಟ ನಿರ್ದೇಶನಗಳಿವೆ. ಯಾವವು ನಂಬಲರ್ಹ, ಯಾವುದನ್ನು ನಂಬಕೂಡದು ಇವುಗಳ ಬಗೆಯೂ ಸ್ಪಷ್ಟ ಧೋರಣೆ. ಒಟ್ಟಾರೆ ಮನುಷ್ಯ ಮತ್ತು ದೇವರ ನಡುವಿನ ಒಂದು ದಿವ್ಯವಾದ ಮಾರ್ಗವದಾಯಿತು. ಕುರಾನಿನಲ್ಲಿ ನೀಡಿದ ಬೋಧನೆಗಳನ್ನೆಲ್ಲಾ ತಾವೇ ಬಾಳಿ ಬದುಕಿ ಮಾದರಿಯಾಗಿದ್ದು ಪ್ರವಾದಿ ಮುಹಮ್ಮದರು.

ಪ್ರವಾದಿ ಮುಹಮ್ಮದರ ಜೀವಿತಾವಧಿಯಲ್ಲಿ ಮತ್ತು ಮೊದಲು ಕೂಡಾ ಅರಬ್ಬರಲ್ಲಿ ಪ್ರತಿಕಾರವೆನ್ನುವುದು ಬಹಳ ಸಹಜವಾದ ವಿಷಯ. ಸೇಡು ತೀರಿಸಿಕೊಳ್ಳದವರು ಮನುಷ್ಯರೇ ಅಲ್ಲ ಅಥವಾ ಹಾಗೆ ಸೇಡು ತೀರಿಸಿಕೊಳ್ಳದೇ ಇರುವುದು ಘನತೆಗೆ ತಕ್ಕುದ್ದಲ್ಲ ಎಂಬಂತೆ ಅವರ ಧೋರಣೆ. ಯಾವುದೇ ಎದುರಾಳಿಯ ಪಂಗಡದಿಂದ ಅಥವಾ ಸಮೂಹದಿಂದ ಅಥವಾ ವ್ಯಕ್ತಿಯಿಂದಾದರೂ ತಮ್ಮಲ್ಲಿ ಶತ್ರುತ್ವ ಹುಟ್ಟುವಂತಹ ಸಂಗತಿ ಜರುಗಿತೆಂದರೆ ಅವರು ರಕ್ತಪಾತದ ಮೂಲಕ ಸೇಡು ತೀರಿಸಿಕೊಳ್ಳುವುದು ಏನೇನೂ ವಿಶೇಷವೇ ಅಲ್ಲ. ಆದರೆ ಅವರ ನಡುವೆ ಹುಟ್ಟಿ, ಬೆಳೆದು, ಅವರೆಲ್ಲಾ ಚಟುವಟಿಕೆಗಳನ್ನು ನೇರವಾಗಿ ಸಾಕ್ಷೀಕರಿಸುತ್ತಾ ಇದ್ದ ಮುಹಮ್ಮದರು ಅವರ ಪ್ರಭಾವಕ್ಕೆ ಸಹಜವಾಗಿ ಒಳಗಾಗಬೇಕಾಗಿತ್ತು. ಆದರೆ ಅವರ ಮನಸ್ಸು ವಾಲಿದ್ದು ಸತ್ಯದ ಕಡೆಗೆ, ಪರಮ ಸತ್ಯದ ಕಡೆಗೆ, ಅಲ್ಲಾಹನ ಕಡೆಗೆ. ಅಲ್ಲಾಹನ ಗುಣವೇ ಶಾಂತಿ, ಕರುಣಾಳು. ಹಾಗಾಗಿಯೇ ದೇವರ ಗುಣಗಳನ್ನು ತಮ್ಮ ಚಟುವಟಿಕೆಗಳಲ್ಲಿ ಪ್ರತಿಫಲಿಸುತ್ತಿದ್ದರು.

ಮುಹಮ್ಮದ್ ಅವರು ವ್ಯಾಪಾರಿಯಾಗಿದ್ದು ತಮ್ಮ ಜೀವನ ನಿರ್ವಹಣೆ ಮಾಡುತ್ತಿದ್ದ ದಿನಗಳಲ್ಲಿ ಅವರು ಸತ್ಯಸಂಧ ಮತ್ತು ಪ್ರಾಮಾಣಿಕರಾಗಿದ್ದರು ಎಂಬ ಹೆಸರು ಪಡೆದಿದ್ದರೂ ತಮ್ಮ ವ್ಯಾಪಾರ ಮತ್ತು ವ್ಯವಹಾರಗಳಿಂದ ಶ್ರೀಮಂತರಾಗುವ ದೃಷ್ಟಿಯನ್ನು ಹೊಂದಿಲ್ಲದ ಇವರನ್ನು ಅವರ ಸಂಬಂಧಿಗಳು ಮತ್ತು ಇತರ ವ್ಯಾಪಾರಿಗಳು ಆಡಿಕೊಳ್ಳುತ್ತಿದ್ದುದ್ದುಂಟು. ಏಕೆಂದರೆ ಇವರ ವ್ಯಕ್ತಿ ವಿಶೇಷಣಗಳಿಂದಾಗಿ, ವ್ಯಾಪಾರದ ಕೌಶಲ್ಯಗಳಿಂದಾಗಿ ಉತ್ತಮ ವ್ಯಾಪಾರವಾಗುತ್ತಿದ್ದರೂ ಗಳಿಸುತ್ತಿದ್ದ ಲಾಭವು ಇತರರಿಗೆ ಹೋಲಿಸಿದರೆ ಕಡಿಮೆಯೇ. ತಮಗೆ ಕಡಿಮೆ ಆದಾಯವಾಗಿದ್ದರೂ ಫುಜ್ಜಾರ್ ಯುದ್ಧದಲ್ಲಿ ಮಡಿದವರ ಚಿಕ್ಕ ಚಿಕ್ಕ ಮಕ್ಕಳಿಗೆ ಮತ್ತು ವಯಸ್ಸಾದವರಿಗೆ ಕೃತಜ್ಞತೆಯನ್ನೂ ಬಯಸದೇ ಜೀವನೋಪಯೋಗಿ ವಸ್ತುಗಳನ್ನು ಕೊಟ್ಟು ಬಂದುಬಿಡುತ್ತಿದ್ದರು. ಅವರು ಹಾಗೆ ಬಂದು ಕೊಡುವುದು ನಿತ್ಯಕ್ರಮವೇ ಆಗಿತ್ತು. ಇತರರು ಅಂದುಕೊಳ್ಳುತ್ತಿದ್ದದ್ದು ಮಾತ್ರ ಮುಹಮ್ಮದ್ ಸಂಪತ್ತಿನ ಬೆಲೆಯನ್ನು ತಿಳಿಯದವನು. ವ್ಯರ್ಥವಾಗಿ ವಿಧವೆಯರಲ್ಲಿ ಮತ್ತು ಅನಾಥರಲ್ಲಿ ವ್ಯಯ ಮಾಡುತ್ತಿದ್ದಾನೆ. ಒಂದು ವೇಳೆ ಇಂತವನ್ನು ಬಿಟ್ಟಿದ್ದರೆ ಇಡೀ ಮಕ್ಕಾದಲ್ಲಿಯೇ ಅತಿ ದೊಡ್ಡ ಸಾಹುಕಾರನಾಗುತ್ತಿದ್ದ ಎಂಬುದು ಉಳಿದವರ ಲೆಕ್ಕಾಚಾರ.

ಆದರೆ ಗಳಿಸಿದ್ದನ್ನು ಉಳಿಸಿ ಜಿಪುಣತನದಿಂದ ಕಾಪಾಡುವುದು ಮುಹಮ್ಮದರ ಉದ್ದೇಶವಾಗಿರಲಿಲ್ಲ. ಬದಲಿಗೆ, ನಿರ್ಗತಿಕರಲ್ಲಿ, ಅನಾಥರಲ್ಲಿ ಮತ್ತು ಅಸಹಾಯಕ ಸ್ಥಿತಿಗಳಲ್ಲಿ ಇರುವ ವ್ಯಕ್ತಿಗಳಿಗೆ ಹಂಚಿಕೊಳ್ಳುವುದು ಅವರ ಗುಣವಾಗಿತ್ತು. ಇವರು ಬರುವುದನ್ನೇ ಕಾಯುತ್ತಿದ್ದು ಅವರಿಂದ ಜೀವನಾಧಾರ ವಸ್ತುಗಳನ್ನು ಪಡೆಯುವುದು ಅಲ್ಲಿ ಸಂತ್ರಸ್ತರ ವಾಡಿಕೆಯಾಗಿತ್ತು. ಮುಹಮ್ಮದರದ್ದು ಗುಪ್ತದಾನ, ಯಾರ ಮೆಚ್ಚುಗೆಗೂ ಅಲ್ಲ, ಯಾವ ದಾಕ್ಷಿಣ್ಯಕ್ಕೂ ಅಲ್ಲ. ಎರಡೇ ಕಾರಣ ಒಂದು ಹಾಗಿರುವುದೇ ಮುಹಮ್ಮುದರು ತಮ್ಮನ್ನು ರೂಪಿಸಿಕೊಂಡಿರುವ ರೀತಿಯಾಗಿತ್ತು. ಮತ್ತೊಂದು ಇದಾಗುತ್ತಿದ್ದದ್ದು ಪರಮ ದಯಾಳುವೂ ಕರುಣಾನಿಧಿಯೂ ಆದ ಅಲ್ಲಾಹನಿಗೊಸ್ಕರ.

ಮಾಡಿದೆನೆಂಬುದು ಮನದಲಿ ಹೊಳೆದಡೆ
ಏಡಿಸಿ ಕಾಡಿತ್ತು ಶಿವನ ಡಂಗುರ.
ಮಾಡಿದೆನೆನ್ನದಿರಾ ಲಿಂಗಕ್ಕೆ, ಮಾಡಿದೆನೆನ್ನದಿರಾ ಜಂಗಮಕ್ಕೆ
ಮಾಡಿದೆನೆಂಬುದು ಮನದಲಿಲ್ಲದಿದ್ದೆಡೆ
ಬೇಡಿತ್ತನೀವ ನಮ್ಮ ಕೂಡಲ ಸಂಗಮದೇವ.

ಝಕಾತ್, ಕೊಡುವುದರ ಮೂಲಕ, ನಾನು ಮಾಡುತ್ತಿದ್ದೇನೆ ಎಂಬ ಅಹಂಕಾರ ಇಲ್ಲದೇ, ಅಲ್ಲಾಹನ ಆದೇಶದ ಅನುಸಾರ ಅವನೇ ತಮಗೆ ಕೊಟ್ಟಿರುವ ತಮ್ಮ ದುಡಿಮೆ ಅಥವಾ ಐಶ್ವರ್ಯದಿಂದ ನಿಶ್ಚಿತ ಮೊತ್ತವನ್ನು ಕೊಡುವುದು. ಇದು ಯಾತ್ರಿಕರ, ಬಡವರ, ದುಃಖಿಗಳ ತಾಪತ್ರಯಗಳನ್ನು ಹೋಗಲಾಡಿಸಲು, ಅಥವಾ ಅವರ ಸಮಸ್ಯೆಯನ್ನು ನಿವಾರಿಸಲು, ಸಾಲದ ಸುಳಿಯಲ್ಲಿ ಸಿಕ್ಕಿಹಾಕಿಕೊಂಡಿರುವವರ ಸಾಲ ತೀರಿಸುವ ಮೂಲಕ ಆ ಹೊರೆಯನ್ನು ಅವರಿಂದ ಇಳಿಸುವುದು ಸಾಧ್ಯವಾಗುತ್ತದೆ.

ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ,
ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ,
ಮಾಡುವ ನೀಡುವ ನಿಜಗುಣವುಳ್ಳಡೆ
ಕೂಡಿಕೊಂಡಿರ್ಪ ನಮ್ಮ ಕೂಡಲಸಂಗಮದೇವ.

ಕೊಡುವಿಕೆಯಲ್ಲಿಯೂ ಶುದ್ಧವಾದ ಮಾದರಿ ಮುಹಮ್ಮದರದು.
ಒಮ್ಮೆ ಹಜರತ್ ಅಬು ಹುರೈರಾ ಅವರಿಗೆ ವಿಪರೀತ ಹಸಿವಾಗುತ್ತಿತ್ತಂತೆ. ನಬಾವಿ ಮಸೀದಿಯಿಂದ ಹೊರಗೆ ಹೊರಟರು. ಯಾರಾದರೂ ಸಹಾಬಿಗಳು ತಿನ್ನಲೋ ಅಥವಾ ಕುಡಿಯಲೋ ಏನಾದರೂ ಕೊಡಬಹುದೆಂಬ ವಿಶ್ವಾಸ ಅವರಿಗೆ. ಮೊದಲು ಅಬೂಬಕರ್ ಎದುರಾದರು, ಸಲಾಂ ಹೇಳಿದರು, ಮುಂದೆ ನಡೆದರು. ನಂತರ ಉಮರ್ ಎದುರಾದರು. ಅವರೂ ಸಲಾಂ ಹೇಳಿ ಮುಂದೆ ನಡೆದರು. ನಂತರ ಪ್ರವಾದಿ ಮುಹಮ್ಮದರು ಕಂಡರು. ಅವರು ಸಲಾಂ ಹೇಳಿ ಅಬು ಅವರನ್ನು ತಮ್ಮ ಮನೆಗೆ ಕರೆದುಕೊಂಡು ಹೋದರು. ಮನೆಯಲ್ಲಿ ಒಂದು ಸಣ್ಣ ಬಟ್ಟಲಿನಲ್ಲಿ ಹಾಲಿತ್ತು. ಮುಹಮ್ಮದರು ಅಬು ಅವರಿಗೆ ಎಪ್ಪತ್ತು ಜನ ವಿದ್ಯಾರ್ಥಿಗಳ ಜೊತೆಗೆ ಹಸಿವನ್ನು ನೀಗಿಸಿದ ಪ್ರತೀತಿ. ಮುಹಮ್ಮದರು ಮೂರನೆಯ ಬಾರಿ ಮತ್ತಷ್ಟು ತೆಗೆದುಕೊಳ್ಳಿರೆಂದಾಗ, “ಆಯಿತು ರಸುಲ್ಲುಲ್ಲಾಹ್, ನನ್ನ ಹೊಟ್ಟೆಯಲ್ಲಿ ಇನ್ನು ಜಾಗವಿಲ್ಲ” ಎಂದರು ಅಬು ಹುರೈರಾ.

ಕೊಡುವಿಕೆ ಎನ್ನುವುದು ಅಲ್ಲಾಹನ ಇಚ್ಛೆಯೇ ಆಗಿದ್ದು ಹೀಗೆ ಝಕಾತ್ ಕೊಡುವುದರಲ್ಲಿ ನಮ್ರತೆ ಇದೆ. ತನ್ನ ಮನಸ್ಸು, ಹೃದಯವನ್ನು ಶುದ್ಧಿಗೊಳಿಸಿಕೊಳ್ಳುವ ಪ್ರಕ್ರಿಯೆ ಭಾಗವಾಗಿದ್ದು, ತನ್ನದು, ತಾನು ಯಾರಿಗೂ ಕೊಡುವುದಿಲ್ಲ, ಅಥವಾ ನಾನು ಗಳಿಸಿದ್ದೆಲ್ಲಾ, ಕೂಡಿಡುವುದೆಲ್ಲಾ ತನ್ನದೇ ಎನ್ನುವುದಿಲ್ಲ. ಇಂತಹ ಅದ್ವಿತೀಯವಾದ ಕೊಡುವಿಕೆಯ ಸಾಧನೆ ಎಂದರೆ ಇಂದು ಇಡೀ ಜಗತ್ತಿನಲ್ಲಿ ದಾರ್ಮಿಕವಾಗಿ ಕೊಡಲ್ಪಡುವ ಅತ್ಯಂತ ದೊಡ್ಡ ಮೊತ್ತದ ದಾನ ಎಂದರೆ ಅದು ಝಕಾತ್.

ಈ ಕೊಡುವಿಕೆ ನಾನಿಷ್ಟುಕೊಟ್ಟೆ, ಅಷ್ಟು ಮಾಡಿದೆ ಎಂದು ಜಂಭಪಡಲು ಅಲ್ಲ ಎನ್ನುವ ಮೇಲ್ಪಂಕ್ತಿ ಮುಹಮ್ಮದರು ಹಾಕಿಕೊಟ್ಟಿದ್ದಾರೆ. ಅಲ್ಲಾಹನಿಂದ ದೊರಕಿರುವ ಐಶ್ವರ್ಯದ ಒಂದು ಭಾಗವನ್ನು ಅಲ್ಲಾಹನ ದಾಸರಿಗೆ ತೆಗೆದಿಡದೇ ಹೋದರೆ ಆ ಸಂಪತ್ತು ಮಲಿನಗೊಳ್ಳುವುದು. ಅಷ್ಟರಮಟ್ಟಿಗೆ ಸಾಮಾಜಿಕ ಮತ್ತು ನೈತಿಕ ಸೂಕ್ಷ್ಮತೆಯನ್ನು ಝಕಾತ್ ಹೊಂದಿರುವುದು.

ಕೊಟ್ಟು ಕುದಿಯಲು ಬೇಡ, ಕೊಟ್ಟಾಡಿಕೊಳಬೇಡ
ಕೊಟ್ಟು ನಾ ಕೆಟ್ಟೆನೆನಬೇಡ, ಶಿವನಲ್ಲಿ
ಕಟ್ಟಿಹುದು ಬುತ್ತಿ ಸರ್ವಜ್ಞ

ಪ್ರವಾದಿ ಮುಹಮ್ಮದರ ಇಸ್ಲಾಂ ಅನುಸರಣೆ ಮತ್ತು ಪ್ರಚಾರಕ್ಕಾಗಿ ತೊಡಗಲು ಹೋದಾಗ ನಾನಾ ರೀತಿಗಳಲ್ಲಿ ಕಿರುಕುಳ, ಅಪಮಾನ, ಹಿಂಸೆ, ಅಪಹಾಸ್ಯಗಳನ್ನೆಲ್ಲಾ ಮಾಡಿದ್ದ ಜನರಿಂದ ತಮ್ಮನ್ನು ಮತ್ತು ಸತ್ಯವನ್ನು ರಕ್ಷಿಸಲು ಯುದ್ಧವನ್ನೇ ಮಾಡಬೇಕಾಗಿ ಬಂದರೂ, ಪ್ರವಾದಿಗಳು ತಮ್ಮ ವೈಯಕ್ತಿಕ ಅಹಮಿನ ಗೆಲುವನ್ನು ಸಂಭ್ರಮಿಸಲು ಯುದ್ಧ ಮಾಡಲೇ ಇಲ್ಲ. ಅದೂ ಕೂಡಾ ಅಲ್ಲಾಹನಿಗೆ ಮತ್ತು ಅವನ ಇಚ್ಛೆಗೆ ಶರಣಾಗಿರುವಂತಹ ಧಾರ್ಮಿಕ ಯುದ್ಧವೇ ಆಗಿತ್ತು. ಅದರಲ್ಲಿ ಮುಖ್ಯವಾದದ್ದು ಬದ್ರ್ ಯುದ್ಧ. ಇಸ್ಲಾಮನ್ನೇ ಇಲ್ಲವಾಗಿಸಲು ಬಂದಂತಹ ಕರಾಳ ಶಕ್ತಿಗಳನ್ನು ತಮ್ಮ ನೈತಿಕ ಮತ್ತು ಆಧ್ಯಾತ್ಮಿಕ ಬಲದಿಂದಲೇ ಸಶಕ್ತವಾಗಿ ಎದುರಿಸಿದ್ದ ಮುಹಮ್ಮದ್ ಮತ್ತು ಅವರ ಅನುಯಾಯಿಗಳು ಗೆದ್ದಾಗ ಆ ಗೆಲುವು ತಮ್ಮದೆಂದು ಬೀಗಲಿಲ್ಲ. ಅಲ್ಲಾಹನಲ್ಲಿ ಅದೇ ವಿನಮ್ರತೆ, ಅದೇ ಶರಣಾಗತಿ.

ಯುದ್ಧ ಕೈದಿಗಳಾದವರನ್ನು ಪರಿಹಾರ ಧನವನ್ನು ಸ್ವೀಕರಿಸಿ ಬಿಟ್ಟುಬಿಡುವ ನಿರ್ಧಾರ ತೆಗೆದುಕೊಂಡಮುಹಮ್ಮದರು ತಮ್ಮ ಅನುಯಾಯಿಗಳೊಂದಿಗೆ ಪೂರ್ವಭಾವಿಯಾಗಿ ಚರ್ಚಿಸಿದ್ದರು. ಪರಿಹಾರ ಧನ ಕೊಡಲಾಗದವರು ಓದು ಬರಹ ಬಲ್ಲವರಾಗಿದ್ದರೆ ಮುಸ್ಲಿಮ್ ಮಕ್ಕಳಿಗೆ ಓದು ಬರಹ ಕಲಿಸಿ ಬಂಧಮುಕ್ತರಾಗಿ ಹೋಗಬಹುದಿತ್ತು. ಕೊನೆಗೆ ಹಣವನ್ನೂ ಕೊಡಲಾಗುತ್ತಿಲ್ಲ, ಅಥವಾ ಕಲಿಸುವಂತಹ ಸೇವೆಯನ್ನೂ ನೀಡಲು ಶಕ್ತರಲ್ಲ ಎಂದಾದರೆ ಬರಿಯ ಔದಾರ್ಯದಿಂದಲೇ ಅವರನ್ನು ಮುಕ್ತರನ್ನಾಗಿಸಿ ಮನೆಗೆ ಕಳುಹಿಸಲಾಗಿತ್ತು.
ಇದು ಯುದ್ಧದಲ್ಲಿ ಬಂಧಿತರಾದವರನ್ನು ಔದಾರ್ಯದ ಮುಹಮ್ಮದರು ನಡೆಸಿಕೊಂಡ ರೀತಿ.

ಮುಂದೆ ಉಹುದ್ ಯುದ್ಧದ ವೇಳೆ ಪ್ರವಾದಿ ಮುಹಮ್ಮದರ ಮುಖಕ್ಕೇ ಏಟು ಬಿದ್ದು ರಕ್ತ ಹರಿಯುತ್ತಿದ್ದಾಗಲೂ ಅವರು ವ್ಯಕ್ತಿಗತವಾದಂತಹ ಕೋಪದಲ್ಲಿ ಕೆರಳಲಿಲ್ಲ. ಬದಲಾಗಿ ಪ್ರಾರ್ಥನೆ ಮತ್ತು ಅಲ್ಲಾಹನಿಗೆ ಕಿವಿಗೊಡುವುದೇ ಅವರ ಒಲವು ನಿಲುವಿನ ಪ್ರಕ್ರಿಯೆಯಾಗಿತ್ತು.

“ಓ ಅಲ್ಲಾಹ್, ನನ್ನ ಜನಾಂಗಕ್ಕೆ ಸನ್ಮಾರ್ಗವನ್ನು ತೋರು. ತಾವೇನು ಮಾಡುತ್ತಿದ್ದೇವೆಂದು ಅವರಿಗೆ ತಿಳಿದಿಲ್ಲ ಅಥವಾ ಅವರನ್ನು ಕ್ಷಮಿಸಿಬಿಡು.”
ಪ್ರವಾದಿಯವರ ಅನುಯಾಯಿಗಳಾಗಿದ್ದ ಸಹಾಬಿಗಳು ಆ ಶತ್ರುಗಳಿಗೆ ಶಾಪ ಕೊಡಲು ಹೇಳಿದಾಗ,
“ನಾನು ಯಾರನ್ನೂ ಶಪಿಸಲಿಕ್ಕಾಗಿ ನೇಮಿಸಲ್ಪಟ್ಟವನಲ್ಲ. ನನ್ನನ್ನು ಒಳಿತು ಕರುಣೆಯ ಸಂದೇಶವಾಹಕರಾಗಿ ನಿಯೋಗಿಸಲಾಗಿದೆ” ಎಂದು ತಮ್ಮ ಈ ಜನ ಅರಿವಿಲ್ಲದೇ ಮಾಡುತ್ತಿರುವ ವಿಷಯಗಳನ್ನು ಕ್ಷಮಿಸುವುದಕ್ಕಾಗಿ ಪ್ರಾರ್ಥಿಸುವರೇ ಹೊರತು ಅಲ್ಲಿ ಪ್ರತಿಕಾರವೆಂಬುದೇ ಇಲ್ಲ.
ತಮ್ಮನ್ನು ಜರಿದರೂ ಕೂಡಾ ಅವರನ್ನು ನಕಾರಾತ್ಮಕವಾಗಿ ನೋಡದೇ ಸೌಜನ್ಯ ಮತ್ತು ಕ್ಷಮಾಶೀಲತೆಯಿಂದಲೇ ನೋಡುವ ಮುಹಮ್ಮದರ ಗುಣವನ್ನು ನಿರೂಪಿಸುವ ಒಂದು ಸಂಗತಿ.
ಮುಹಮ್ಮದರಿಗೆ ಸಾಲ ಕೊಟ್ಟಿದ್ದ ಯಹೂದಿಯೊಬ್ಬನು ಅವರ ಬಳಿ ವಸೂಲಿಗೆಂದು ಬಂದಿದ್ದನು. ಐಷಾರಾಮಿ ಜೀವನ ನಡೆಸದ, ಸರಳಾತಿ ಸರಳ ಬದುಕು ನಡೆಸುತ್ತಿದ್ದ ಮುಹಮ್ಮದರು ಸಾಲ ಎಂದು ಮಾಡುತ್ತಿದ್ದದ್ದು ತಮ್ಮ ವೈಭವಕ್ಕಂತೂ ಅಲ್ಲ. ಯಾರೋ ದೀನರ, ನೊಂದರವರ ಕಷ್ಟಗಾಲದಲ್ಲಾಗಲು.
ಈ ಯಹೂದಿಯು ಇನ್ನೂ ಸಾಲ ತೀರಿಸಲು ನೀಡಿದ್ದ ಗಡುವು ಮೂರು ದಿನವಿದ್ದಂತೆಯೇ ಬಂದು ಹಣಕ್ಕಾಗಿ ಒತ್ತಾಯಿಸುವುದಲ್ಲದೇ ಒರಟಾಗಿ ನಡೆದುಕೊಳ್ಳುತ್ತಾ ಜೋರು ಮಾಡುತ್ತಿದ್ದ. ಆದರೆ ಮುಹಮ್ಮದರು ತಮ್ಮ ಗುಣ ಸ್ವಭಾವದ ಸಹಜತೆಯಿಂದಾಗಿ ಸೌಜನ್ಯ ಮತ್ತು ವಿನಯದಿಂದಲೇ ಉತ್ತರಿಸುತ್ತಿದ್ದರು.

ಸಾಲ ಕೊಟ್ಟಿರುವ ಮದದಿಂದ ಉನ್ಮತ್ತನಾಗಿದ್ದ ಆ ಯಹೂದಿಯು ‘ಅಬ್ದುಲ್ ಮುತ್ತಲಿಬ್’ ಅವರ ಸಂತತಿಯನ್ನೇ ಅನುಮಾನಿಸುತ್ತಾ ಅಪಮಾನಿಸುವಂತೆ ಮಾತಾಡಿದ. ಮುಹಮ್ಮದರ ಜೊತೆಯಲ್ಲಿಯೇ ಇದ್ದ ಉಮರ್ ಕೋಪಗೊಂಡು ಆ ಯೆಹೂದಿಯನ್ನು ಗದರಿಸಿದರು. ಇನ್ನೊಮ್ಮೆ ಅಂತಹ ಮಾತುಗಳನ್ನಾಡದಿರುವಂತೆ ಎಚ್ಚರಿಸಿದರು.
ಆಗ ಮುಹಮ್ಮದರು, “ಉಮರ್, ನೀವು ಅವರೊಂದಿಗೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳಬಹುದಿತ್ತು. ಮರು ಪಾವತಿ ಮಾಡಲು ಇನ್ನಷ್ಟು ಸಮಯ ಕೇಳಬಹುದಿತ್ತು. ಈಗ ಮೂರು ದಿನಗಳ ಗಡುವು ಇದ್ದರೂ ಈಗಲೇ ತೀರಿಸಿಬಿಡಿ ಮತ್ತು ಅವರನ್ನು ಜರಿದುದಕ್ಕಾಗಿ ಅವರಿಗೆ ಇನ್ನಷ್ಟು ಹೆಚ್ಚಿನ ಮೊತ್ತವನ್ನು ಪರಿಹಾರವಾಗಿ ನೀಡಿ” ಎಂದರು.

ಮುಹಮ್ಮದರ ಇಂತಹ ಸೌಜನ್ಯ ಮತ್ತು ಕ್ಷಮಾಶೀಲತೆಯೇ ಆ ಯಹೂದಿಯನ್ನೂ ಇಸ್ಲಾಂ ಸ್ವೀಕರಿಸುವಷ್ಟು ಮನಪರಿವರ್ತನೆಯಾಗಿತ್ತು. ಓರ್ವ ಆಡಳಿತಗಾರರಾಗಿ ಕಿರುಕುಳವನ್ನು ತಡೆಯಲು ಯುದ್ಧವನ್ನೇ ಮಾಡಬೇಕಾದ ಅನಿವಾರ್ಯತೆ ಒದಗಿ ಅದಕ್ಕೆಂದು ಸಿದ್ಧವಾದಾಗಲೂ ಮುಹಮ್ಮದರು ಅಲ್ಲಾಹನ ಹೆಸರಿಂದ, ಅಲ್ಲಾಹನ ಮಾರ್ಗದಲ್ಲಿ ಸತ್ಯನಿಷೇಧಿಗಳೊಂದಿಗೆ ಹೋರಾಡುವಂತಹ ಅವರಿಗೆ ಉಪದೇಶಿಸಿದ್ದು ಹೀಗೆ, “ವಚನ ಭಂಗ ಮಾಡಕೂಡದು. ಯಾವುದೇ ರೀತಿಯಲ್ಲಿ ಅತಿಕ್ರಮ ಎಸಬಾರದು, ಯಾವುದೇ ಮಗು, ಮಹಿಳೆ ಮತ್ತು ವಯಸ್ಸಾದವರ ಹಾಗೂ ಪ್ರಾರ್ಥನೆ ಅಥವಾ ಆರಾಧನೆ ಮಾಡುತ್ತಿರುವವರ ಮೇಲೆ ದಾಳಿ ಮಾಡಕೂಡದು, ಅವರನ್ನು ಕೊಲ್ಲಕೂಡದು. ಖರ್ಜೂರದ ತೋಟಗಳ ಕಡೆ ಸುಳಿಯಬಾರದು. ಯಾವುದೇ ಮರವನ್ನೂ ಕಡಿಯಬಾರದು. ಯಾರದೇ ಮನೆಯನ್ನು ಕೆಡವಬಾರದು.”

ತಾವು ಇತರ ವ್ಯಾಪಾರಿಗಳಂತೆ ಮನಸ್ಸು ಮಾಡಿದ್ದರೆ ಸುಖವಾಗಿ ಅತಿ ಶ್ರೀಮಂತರಾಗಿದ್ದಿರಬಹುದಾದ ಯೌವನದ ಕಾಲದಲ್ಲಿಯೇ ಅಂತಹವನ್ನಲ್ಲ ತ್ಯಾಗ ಮಾಡಿದ್ದವರು ಈ ಯುದ್ಧವನ್ನು ಮಾಡಬೇಕಾದ ಕಾರಣವೂ ವ್ಯಕ್ತಿಗತವಾದ ಅಹಂಕಾರದ ಪುಷ್ಟಿ, ಬಯಕೆಯ ತೃಪ್ತಿ ಮತ್ತು ತಮ್ಮ ಸಂಪತ್ತನ್ನು ಹೆಚ್ಚಿಸಿಕೊಳ್ಳಲಲ್ಲವಲ್ಲ!

ಹಾಗಾಗಿಯೇ ಅಲ್ಲಾಹನ ಆಶಯಕ್ಕೆ ತಕ್ಕುದಾದಂತಹ ವಿನಯ, ಶಿಸ್ತು, ಕ್ರಮ ಮತ್ತು ಸನ್ನಡತೆ ಎಲ್ಲವೂ.
ಇದು ಜನರ ಮಧ್ಯೆ ಮಾಡಿಕೊಂಡಿರುವಂತಹ ರಾಜಿ, ಸಂಧಾನವಲ್ಲ! ಅಲ್ಲಾಹನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆ.

ಖಂಡಿತವಾಗಿಯೂ ಅಲ್ಲಾಹನು ನಿಮಗೆ ನ್ಯಾಯ ಪಾಲಿಸಬೇಕೆಂದೂ ಸೌಜನ್ಯ ತೋರಬೇಕೆಂದೂ, ಬಂಧುಗಳಿಗೆ ಅವರ ಹಕ್ಕನ್ನು ನೀಡಬೇಕೆಂದೂ ಆದೇಶಿಸುತ್ತಾನೆ ಮತ್ತು ಅವನು ನಿಮ್ಮನ್ನು ಅಶ್ಲೀಲ ಕೃತ್ಯಗಳಿಂದಲೂ, ಅನ್ಯಾಯದಿಂದಲೂ, ವಿದ್ರೋಹದಿಂದಲೂ ತಡೆಯುತ್ತಾನೆ. ನೀವು ಪಾಠ ಕಲಿಯಬೇಕೆಂದು ಅವನು ನಿಮಗೆ ಉಪದೇಶಿಸುತ್ತಾನೆ.
ನೀವು ಅಲ್ಲಾಹನ ಜೊತೆ ಕರಾರು ಮಾಡಿರುವಾಗ ಆ ಕರಾರನ್ನು ತಪ್ಪದೆ ಪಾಲಿಸಿರಿ. ಮತ್ತು ಪ್ರತಿಜ್ಞೆ ಮಾಡಿ ಅದನ್ನು ದೃಢಪಡಿಸಿದ ಬಳಿಕ ಹಾಗೂ ನೀವು ಖಚಿತವಾಗಿ ಅಲ್ಲಾಹನನ್ನು ನಿಮ್ಮ ಮೇಲೆ ಸಾಕ್ಷಿಯಾಗಿಸಿಕೊಂಡ ಬಳಿಕ ಆ ಪ್ರತಿಜ್ಞೆಯನ್ನು ಮುರಿಯಬೇಡಿ. ನೀವು ಮಾಡುವುದೆಲ್ಲವನ್ನೂ ಅಲ್ಲಾಹನು ಖಂಡಿತ ಬಲ್ಲನು. (ಕು: 16. 90-91) ವ್ಯಕ್ತಿಗಳು ಸನ್ನಡತೆಗಳಿಂದಲೇ ಅವರ ಆಲೋಚನೆ, ಹೊಂದಿರುವ ಮನೋಭಾವ, ಉದ್ದೇಶ, ಗಮ್ಯ ಮತ್ತು ಗಮನ; ಎಲ್ಲವನ್ನೂ ಪ್ರದರ್ಶಿಸುವುದು.

ಅಲ್ಲಾಹನನ್ನೇ ಪೂಜಿಸಿರಿ ಮತ್ತು ಅವನ ಜೊತೆ ಏನನ್ನೂ ಸೇರಿಸಬೇಡಿ. ಹೆತ್ತವರ ವಿಷಯದಲ್ಲಿ ಹಾಗೂ ಆಪ್ತ ಬಂಧುಗಳು, ನೆರೆಯಲ್ಲಿರುವ ಅಪರಿಚಿತರು, ಜೊತೆಗಾರರು, ಪ್ರಯಾಣಿಕರು ಮತ್ತು ನಿಮ್ಮ ಮಾಲಕತ್ವದಲ್ಲಿ ಇರುವವರ ವಿಷಯದಲ್ಲಿ ಸೌಜನ್ಯ ತೋರಿರಿ. ಖಂಡಿತವಾಗಿಯೂ ಅಲ್ಲಾಹನು ಅಹಂಕಾರಿಗಳನ್ನು ಮತ್ತು ಸ್ವತಃ ತಮ್ಮನ್ನೇ ಹೊಗಳಿಕೊಳ್ಳುವವರನ್ನು ಪ್ರೀತಿಸುವುದಿಲ್ಲ. (4:36)
ಕೊಡುವುದರಲ್ಲಾಗಲಿ, ಸನ್ನಡತೆಯಿಂದ ವರ್ತಿಸುವುದರಲ್ಲಾಗಲಿ, ಮಾಡುವ ಕೆಲಸದಲ್ಲಾಗಲಿ, ನೀಡುವ ಸೇವೆಯಲ್ಲಾಗಲಿ ಜಿಪುಣತನವೆಂಬುದು ಅವರಲ್ಲಿರಲಿಲ್ಲ. ಕರುಣೆ, ಸೌಜನ್ಯವೇ ಮೊದಲಾದ ಸದ್ಗುಣಗಳಲ್ಲಿ ಮಾತ್ರವಲ್ಲ, ವಸ್ತುಗಳನ್ನು ಕೊಡುವುದರಲ್ಲಿಯೂ ಧಾರಾಳ.

ಜಿಪುಣತೆ ತೋರುವವರನ್ನು, ಜನರಿಗೆ ಜಿಪುಣತೆ ಬೋಧಿಸುವವರನ್ನು ಮತ್ತು ಅಲ್ಲಾಹನು ತನ್ನ ಅನುಗ್ರಹದಿಂದ ನೀಡಿರುವುದನ್ನು ಬಚ್ಚಿಡುವವರನ್ನು (ಅಲ್ಲಾಹನು ಪ್ರೀತಿಸುವುದಿಲ್ಲ). ಧಿಕ್ಕಾರಿಗಳಿಗೆ ನಾವು ಅಪಮಾನಕಾರಿ ಶಿಕ್ಷೆಯನ್ನು ಸಿದ್ಧಗೊಳಿಸಿಟ್ಟಿದ್ದೀವೆ. (4: 37)

ತಮಗೆ ಕೆಡುಕ ಮಾಡುವವರಿಗೂ ಸೌಜನ್ಯ ತೋರಿ ಅವರಲ್ಲಿ ಪರಿವರ್ತನೆಗಾಗಿ ಪ್ರಾರ್ಥಿಸುವ ಮುಹಮ್ಮದರ ಜೀವನವೇ ಅನುಕರಣೀಯ ಸನ್ನಡತೆಯ ಮತ್ತು ಸದ್ಗುಣದ ಮಾದರಿ.
ನೀನೀಗ ನನ್ನನ್ನು ಕೊಲ್ಲಲಿಕ್ಕೆಂದು ನನ್ನ ಮೇಲೆ ಕೈ ಎತ್ತಿದರೂ, ನಾನಂತೂ ನಿನ್ನನ್ನು ಕೊಲ್ಲಲು ನಿನ್ನ ಮೇಲೆ ಕೈ ಎತ್ತುವವನಲ್ಲ. ಖಂಡಿತವಾಗಿಯೂ ನನಗೆ ಸರ್ವಲೋಕಗಳ ಪಾಲಕನಾದ ಅಲ್ಲಾಹನ ಭಯವಿದೆ. (5:28)

ಪ್ರವಾದಿ ಮುಹಮ್ಮದರಿಗೆ ಯಾರದ್ದೂ ಭಯವಿರಲಿಲ್ಲ. ಇದ್ದ ಭಯವೆಂದರೆ ಅದು ಅಲ್ಲಾಹನದು ಮಾತ್ರ. ಅಲ್ಲಾಹನೊಬ್ಬನಲ್ಲಿಯೇ ಇದ್ದಂತಹ ಭಯ ಮತ್ತು ಭಕ್ತಿ ತಮ್ಮ ಸಹ ಜೀವಿಗಳೆಲ್ಲ ಜೊತೆ ವರ್ತಿಸುವ ಬಗೆಗಳಲ್ಲಿ ಪ್ರತಿಫಲಿತವಾಗುತ್ತಿತ್ತು.

ಪಾಶ್ಚಾತ್ಯ ಇತಿಹಾಸ ವಿದ್ವಾಂಸರಾದ ಸರ್ ವಿಲಿಯಮ್ ಮ್ಯೂರ್ ಹೇಳುವಂತೆ, ಮುಹಮ್ಮದರ ಮಾರ್ಗದರ್ಶನದಿಂದಾಗಿ ಮದೀನಾದ ಪ್ರಜೆಗಳು ಕೈದಿಗಳನ್ನೂ ಸನ್ನಡತೆಯಿಂದ ಉಪಚರಿಸುವಷ್ಟು ಪರಿಗಣಿಸಿದರು. ಮುಂದಿನ ದಿನಗಳಲ್ಲಿ ಮದೀನಾದಲ್ಲಿ ಕೈದಿಯಾಗಿದ್ದವನೊಬ್ಬ ಹೇಳುತ್ತಿದ್ದನಂತೆ, ‘ಮದೀನಾದ ಜನರು ಅನುಗ್ರಹಿತರು. ಅವರು ತಾವು ಬರಿಗಾಲಿನಲ್ಲಿ ನಡೆಯುತ್ತಾ ಕೈದಿಗಳನ್ನು ಸವಾರಿಯಲ್ಲಿ ಕೊಂಡೊಯ್ದರು. ತಾವು ತಿನ್ನುವುದು ಅಲ್ಪವೇ ಆಗಿದ್ದರೂ, ಖರ್ಜೂರದಲ್ಲಿಯೇ ಹೊತ್ತಿನ ಆಹಾರ ಮುಗಿಸಿಕೊಳ್ಳುತ್ತಿದ್ದರೂ ನಮಗೆ ಗೋಧಿಯ ರೊಟ್ಟಿ ಕೊಟ್ಟಿದ್ದರು.”

ಇದು ಮುಹಮ್ಮದರ ಗುಣ ನಡವಳಿಕೆಗಳು ಜನರನ್ನೇ ರೂಪಾಂತರಿಸಿದ್ದ ರೀತಿ.
ಮನುಷ್ಯ ನೈಸರ್ಗಿಕವಾಗಿಯೇ ಕೇಡಿಯಾಗಿದ್ದಾನೆ.
ಮನುಷ್ಯ ನಿಜಕ್ಕೂ ಅಕ್ರಮಿ ಮತ್ತು ಅಜ್ಞಾನಿಯಾಗಿದ್ದಾನೆ. (ಕುರಾನ್: 33.72)

ಅವನು ತನಗೆ ಸಹಜವಾಗಿರುವ ಪಶುಪ್ರವೃತ್ತಿಗಳನ್ನು ತೃಪ್ತಿಪಡಿಸಿಕೊಳ್ಳಲು ತನ್ನ ಮನಸ್ಸನ್ನೂ ಉಪಯೋಗಿಸಿಕೊಳ್ಳುತ್ತಾನೆ. ಇದರಿಂದ ಲೋಕದಲ್ಲಿ ಕ್ಷೋಭೆ ಉಂಟಾಗುವುದಲ್ಲದೇ ತನ್ನ ಬದುಕನ್ನೂ ಮತ್ತು ಇತರರ ಬದುಕನ್ನೂ ನಾಶ ಮಾಡುತ್ತಾನೆ.ನಷ್ಟವಾದಾಗ ಕುಗ್ಗುತ್ತಾನೆ, ಲಾಭವಾದಾಗ ಹಿಗ್ಗುತ್ತಾನೆ. ತನಗಿಂತ ಇನ್ನಾರೂ ಇಲ್ಲ ಎಂದು ವರ್ತಿಸುತ್ತಾನೆ.ಹಾಗಾಗಿಯೇ ಅವನಿಗೆ ಅಗತ್ಯವಿರುವಂತ ನೈತಿಕತೆಯನ್ನು ಮತ್ತು ಬದುಕುವ ಮಾರ್ಗವನ್ನು ಇಸ್ಲಾಮಿನಲ್ಲಿ ತೋರುವ ಪ್ರವಾದಿ ಮಾಡುತ್ತಾರೆ.

ಮಾನವನು ಚಂಚಲನಾಗಿಯೇ ಸೃಷ್ಟಿಸಲ್ಪಟ್ಟಿದ್ದಾನೆ. ಅವನಿಗೆ ಸಂಕಷ್ಟ ಬಂದಾಗ ಗಾಬರಿಗೊಳ್ಳುತ್ತಾನೆ ಮತ್ತು ಸೌಭಾಗ್ಯಾ ಪ್ರಾಪ್ತವಾದಾಗ ಲೋಭ ತೋರುತ್ತಾನೆ. ಆದರೆ ನಮಾಝ್ ಮಾಡುವವರು ಈ ದೋಷಗಳಿಂದ ಮುಕ್ತರಾಗಿದ್ದಾರೆ. (70:19-22)

ಸ್ಪರ್ಧೆ, ಅಸೂಯೆ, ದುರಾಸೆ, ಕಪಟತನ, ಸ್ವಾರ್ಥವೇ ಮೊದಲಾದ ಆತ್ಮಘಾತಕ ಗುಣಗಳಿಂದ ಕಳಚಿಕೊಳ್ಳಲು, ಆ ಕಳಂಕಗಳಿಂದ ಮುಕ್ತವಾಗಲು, ನಿಜವಾಗಿಯೂ ಮಾನವನ ಇಹ ಮತ್ತು ಪರದ ಅಗತ್ಯತೆಗಳನ್ನು ಪೂರಿಸಿಕೊಳ್ಳಲು ಮನುಷ್ಯನು ಪರಿಶುದ್ಧನಾಗಬೇಕಿದೆ.

ಮನಸ್ಸು (ಹೃದಯ)ಗಳು ದುರ್ಬಲವೂ ಮತ್ತು ಅನುಮಾನಗಳು ಆಕ್ರಮಣಕಾರಿಯಾಗಿ ಕಿತ್ತುಕೊಳ್ಳುವಂತವೇ ಆಗಿವೆ. (ಸಿಯಾರ್ ಅಲಂ ಅಲ್ ನುಬಾಲ 7/261)

ಮನಸ್ಸನ್ನು, ಹೃದಯವನ್ನು ಪರಿಶುದ್ಧವಾಗಿರಿಸಿಕೊಳ್ಳುವುದರ ಮೂಲಕ ಇಡೀ ಬದುಕನ್ನೇ ಪರಿಶುದ್ಧವಾಗಿಸಿಕೊಳ್ಳುವ ಮಾದರಿ ಅವರದು.

ಸಂದೇಶವಾಹಕರು ಹೇಳುತ್ತಾರೆ: ಓ ಅಬು ಢಾರ್ರ್, ಸಮೃದ್ಧವಾದ ಧನಕನಕಗಳನ್ನು ಶ್ರೀಮಂತಿಕೆ ಎಂದು ಊಹಿಸುತ್ತೀಯಾ? ಹೃದಯ ಶ್ರೀಮಂತಿಕೆಯೇ ಶ್ರೀಮಂತಿಕೆ, ಹೃದಯದ ದಾರಿದ್ರ್ಯವೇ ದಾರಿದ್ರ್ಯ. ಹೃದಯದಲ್ಲಿ ಶ್ರೀಮಂತವಾಗಿರುವವರು ಈ ಪ್ರಪಂಚದಲ್ಲಿ ಏನನ್ನೇ ಎದುರಿಸಿದರೂ ಕುಂದಲಾರರು. ಹೃದಯದಲ್ಲಿ ದಾರಿದ್ರ್ಯವಿರುವವರು ಈ ಲೋಕದಲ್ಲಿ ಎಷ್ಟೇ ಗಳಿಸಿದರೂ ಶ್ರೀಮಂತರಾಗಲಾರರು. ಅವರ ತಮ್ಮತನವನ್ನು ಧಕ್ಕೆ ಗೊಳಿಸುವುದು ಆ ದೌರ್ಬಲ್ಯವೇ. (ಸಹಿಹ್ ಅಲ್ ಜಮಿ / 7816)

ಮನೋದೌರ್ಬಲ್ಯಗಳಿಂದಾಗಿಯೇ ಮನುಷ್ಯನು ತನಗೆ ಲಭ್ಯವಾಗುವ ಅರಿವನ್ನು ಅನುಭವವನ್ನಾಗಿಸಿಕೊಳ್ಳಲು ಎಡವುತ್ತಾನೆ. ಒಮ್ಮೆ ಸನ್ಮಾರ್ಗದಲ್ಲಿ ನಡೆಯುವವನು, ಮತ್ತೊಮ್ಮೆ ದುರ್ಮಾರ್ಗಕ್ಕೆ ಎಳೆಯಲ್ಪಡುತ್ತಾನೆ. ಲೋಕದ ಇತರ ಪ್ರಭಾವಗಳು, ಪ್ರಲೋಭನೆಗಳು ಆತನನ್ನು ಎಳೆಯುತ್ತವೆ. ತನ್ನ ಗಮ್ಯವನ್ನು ಸದಾ ಧ್ಯಾನಿಸುತ್ತಾ ಗಮನವಿಟ್ಟು ತನ್ನ ಕೆಲಸ ಕಾರ್ಯಗಳ ಮೂಲಕ, ವರ್ತನೆಗಳ ಮೂಲಕ ಮಾರ್ಗ ತಪ್ಪದಂತೆ ತನ್ನನ್ನು ತಾನೇ ತರಬೇತುಗೊಳಿಸಿಕೊಳ್ಳಬೇಕು.
ನಿಮ್ಮ ಚಟುವಟಿಕೆಗಳನ್ನು ತ್ವರೆಗೊಳಿಸಿ ಅರಿವು ಕತ್ತಲರಾತ್ರಿಯ ತುಂಡುಗಳಂತೆ ಬರುವಷ್ಟರಲ್ಲಿ. ತನ್ನ ಸತ್ಯವಿಶ್ವಾಸವನ್ನು ಲೌಕಿಕ ಲಾಭಕ್ಕಾಗಿ ಮಾರಾಟ ಮಾಡಿಕೊಳ್ಳುತ್ತಾ ಒಬ್ಬ ಬೆಳಗ್ಗೆ ವಿಶ್ವಾಸಿಯಾಗಿರುವನು, ರಾತ್ರಿ ಅವಿಶ್ವಾಸಿಯಾಗಿರುವನು. ಅಥವಾ ರಾತ್ರಿ ವಿಶ್ವಾಸಿಯಾಗಿರುವನು ಮತ್ತೆ ಬೆಳಗ್ಗೆ ಅವಿಶ್ವಾಸಿಯಾಗಿರುವನು. (ಮುಸ್ಲೀಂ – 118)

ಏನೆಲ್ಲಾ ಮಾಡಿದರೂ ತಪ್ಪಾದರೇನು ಮಾಡುವುದು? ಅಹುದು, ಮರಳಿ ಪ್ರಯತ್ನವ ಮಾಡಲೇ ಬೇಕು.
ಹೇಳಿರಿ, ಸ್ವತಃ ತಮ್ಮ ಮೇಲೆ ಅಕ್ರಮವೆಸಗಿಕೊಂಡಿರುವ ನನ್ನ ಅಲ್ಲಾಹನ ದಾಸರೇ, ಅಲ್ಲಾಹನ ಅನುಗ್ರಹದ ಕುರಿತಂತೆ ನಿರಾಶರಾಗಬೇಡಿ. ಅಲ್ಲಾಹನು ಖಂಡಿತ ಎಲ್ಲಾ ಪಾಪಗಳನ್ನೂ ಕ್ಷಮಿಸುತ್ತಾನೆ. ಅವನು ಖಂಡಿತ ತುಂಬಾ ಕ್ಷಮಿಸುವವನು ಮತ್ತು ಕರುಣೆ ತೋರುವವನೂ ಆಗಿದ್ದಾನೆ. (39: 53)

ವ್ಯಕ್ತಿಯೊಬ್ಬನು ತನ್ನ ಕಪಟತನವನ್ನು ತಾನೇ ಅರಿತುಬಿಟ್ಟರೆ, ತನ್ನ ರೋಗಕ್ಕೆ ತಾನೇ ಚಿಕಿತ್ಸೆ ತೆಗೆದುಕೊಳ್ಳಲು ಸಾಧ್ಯವಾಗುವಂತಾಗುತ್ತದೆ.
ಹೃದಯ (ಮನೋಭಾವ)ಗಳಲ್ಲಿ ನಾಲ್ಕು ವಿಧ: ಎರಡು ಮುಖಗಳುಳ್ಳ ಮನಸ್ಸು. ಇದು ಕಪಟತನದ ವೇಷಧಾರಿ ಮನಸ್ಸು; ಇದು ಅವಿಶ್ವಾಸಿಯ ಮನಸ್ಸು. ಒಂದು ಪರಿಶುದ್ಧ ಮನಸ್ಸು, ಪ್ರಕಾಶಮಾನವಾಗಿರುವ ದೀಪವೊಂದು ಒಳಗಿರುವಂತೆ. ಈ ಹೃದಯ ವಿಶ್ವಾಸದಿಂದ ಕೂಡಿದ್ದು. ಇನ್ನೊಂದು ಮನಸ್ಸು ಕಪಟತನ ಮತ್ತು ವಿಶ್ವಾಸ ಎರಡನ್ನೂ ಹೊಂದಿರುವಂತದ್ದು, ರಕ್ತ ಮತ್ತು ಕೀವುಗಳಿಂದ ಕೂಡಿರುವ ಹುಣ್ಣಿದ್ದಂತೆ, ಕೊಳಕು ಮತ್ತು ಶುದ್ಧ; ಎರಡೂ ಬಗೆಯ ನೀರನ್ನು ಹನಿಸಿಕೊಂಡು ಬೆಳೆದಿರುವ ಮರದಂತೆ. ಆ ಎರಡರಲ್ಲಿ ಯಾವುದೇ ಒಂದು ಹಿರಿದಾದರೂ ಹೃದಯ (ಮನಸ್ಸು) ಗೆಲ್ಲುವುದು. (ಇಬ್ನ್ ಅಬಿ ಶಯ್ಬಾಹ್ ಇನ್ ಕಿತಾಬ್ ಅಲ್ ಇಮಾನ್ – 54)
ನಾನೊಬ್ಬ ಉದ್ದಾರವಾದರೆ ಸಾಕು ಎನ್ನುವ ಮಾತಲ್ಲ ಇದು. ಮನುಷ್ಯ ಸಂಘಜೀವಿ. ನನ್ನ ಒಡಹುಟ್ಟುಗಳೂ, ಸಹಜೀವಿಗಳೂ ಒಟ್ಟಾಗಿಯೇ ಮನುಷ್ಯನ ಲೋಕವನ್ನು ನಿರ್ಮಿಸಿ ನಿರ್ವಹಿಸುತ್ತಿರುವುದು. ನಮ್ಮ ಸಹಜೀವಿಗಳನ್ನೂ ಜೊತೆಗೊಯ್ಯುವ ಬಾಧ್ಯತೆಯೂ ನಮಗಿದೆ. ಆದರೆ ಅವರು ನಮ್ಮ ವಿಷಯವನ್ನು ಅರಿಯಲು ವಿಮುಖರಾದರೆ?

“ಅವರು ನಿಮ್ಮ ಮಾತನ್ನು ಸ್ವೀಕರಿಸದಿದ್ದರೆ, ನಿಮಗೆ ತಿಳಿದಿರಲಿ; ಅವರು ಕೇವಲ ತಮ್ಮ ಸ್ವೇಚ್ಛೆಯನ್ನಷ್ಟೇ ಅನುಸರಿಸುತ್ತಿದ್ದಾರೆ. ಅಲ್ಲಾಹನ ಕಡೆಯಿಂದ ಯಾವುದೇ ಮಾರ್ಗದರ್ಶನವಿಲ್ಲದೆ, ತನ್ನ ಸ್ವೇಚ್ಛೆಯನ್ನು ಅನುಸರಿಸುವಾತನಿಗಿಂತ ಹೆಚ್ಚು ದಾರಿಗೆಟ್ಟವನು ಯಾರಿರಬಹುದು? ಅಲ್ಲಾಹನು ಅಕ್ರಮಿಗಳಿಗೆ ಖಂಡಿತ ದಾರಿ ತೋರುವುದಿಲ್ಲ.” (ಕು. 28-50)

ನಮ್ಮನ್ನು ನೇರವಾದ ಮಾರ್ಗದಲ್ಲಿ ನಡೆಸು ಎನ್ನುವುದೇ ಪ್ರಾರ್ಥನೆ. ದಾರಿತಪ್ಪಿರುವವರ ದಾರಿಯಲ್ಲ. ಅಲ್ಲಾಹನಿಂದ ಅನುಗ್ರಹಿತವಾಗಿರುವ ದಾರಿಯದು.
ಶ್ರೇಷ್ಟತೆಯು ನೀವು ಮನೆಗಳಿಗೆ ಹಿಂಬಾಗಿಲಿನಿಂದ ಪ್ರವೇಶಿಸುವುದನ್ನು ಅವಲಂಬಿಸಿಲ್ಲ. ನಿಜವಾಗಿ ಭಯ ಭಕ್ತಿ ಉಳ್ಳವನೇ ಶ್ರೇಷ್ಟನು. ನೀವಿನ್ನು ಮನೆಗಳಿಗೆ ಮುಂಬಾಗಿಲಿನಿಂದಲೇ ಪ್ರವೇಶಿಸಿರಿ ಮತ್ತು ಅಲ್ಲಾಹನಿಗೆ ಅಂಜುತ್ತಲಿರಿ – ನೀವು ವಿಜಯಿಗಳಾಗಲಿಕ್ಕಾಗಿ. (ಕು. 2:189)

ಏಕೆಂದರೆ ಹೃದಯದ ಮೇಲೆ ಗಾಯದ ಕಲೆಗಳನ್ನು ಉಳಿಸುವುದೇ ಪಾಪಗಳು.
ತಮ್ಮಿಷ್ಟಕ್ಕೆ ತಾವೇ ತಮ್ಮ ಅಹಂಕಾರದಿಂದ ಪ್ರೇರೇಪಿತರಾಗಿ ನಡೆದುಕೊಳ್ಳುವವರಿಗೆ ಪ್ರವಾದಿ ಮುಹಮ್ಮದರು ಅರ್ಥವಾಗರು.
ಪ್ರವಾದಿ ಮುಹಮ್ಮದರು ಅರಬ್ಬರನ್ನು ಅಹಂಕಾರದಿಂದ ವಿನಯಕ್ಕೆ, ಕ್ರೌರ್ಯದಿಂದ ಕರುಣೆಗೆ, ಒಡಕುತನದಿಂದ ಒಗ್ಗಟ್ಟಿಗೆ, ಚಂಚಲತೆಯಿಂದ ದೃಢವಾದ ಶ್ರದ್ಧೆಗೆ, ಅನೇಕ ದೇವತಾರಾಧನೆಗಳಿಂದ ಏಕ ದೇವನಿಗೆ, ಅನೈತಿಕತೆಯಿಂದ ಪಾವಿತ್ರ್ಯತೆಗೆ, ಸೇಡಿನಿಂದ ಕ್ಷಮೆಗೆ, ಸೋಮಾರಿತನದಿಂದ ಕಾಯಕ ನಿಷ್ಟೆಗೆ, ಸ್ವಾರ್ಥದಿಂದ ನಿಸ್ವಾರ್ಥಕ್ಕೆ, ಒರಟುತನದಿಂದ ನಾಜೂಕುತನಕ್ಕೆ, ಸ್ವಂತದರ ವ್ಯಾಮೋಹದಿಂದ ಸರ್ವೋದಯದ ಧೋರಣೆಗೆ, ಮೂರ್ಖತನದಿಂದ ಜಾಣತನಕ್ಕೆ ತಂದಂತೆ ನನ್ನ ಅರಿವಿನ ಪ್ರವಾದಿಯ ಸಾಕ್ಷಾತ್ಕಾರದಿಂದ ಜೀವಿತದ ಮಹೋನ್ನತ ಮೌಲ್ಯದ ಅರಿವು ಸಾಕ್ಷಾತ್ಕಾರವಾಗುವುದು. ನನ್ನ ಪ್ರೀತಿಯ ಪ್ರವಾದಿಯ ಅರಿವು ನನ್ನ ಹೃದಯದಲ್ಲಿ, ನಡೆಯಲ್ಲಿ, ಆಲೋಚನೆ ಮತ್ತು ವರ್ತನೆಗಳಲ್ಲಿ ಪ್ರತಿಫಲಿಸುತ್ತಲೇ ಇರಲೆಂಬ ಪ್ರಾರ್ಥನೆ ನನ್ನದು.(ಬರಹ-ಯೋಗೇಶ್ ಮಾಸ್ಟರ್)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending