ನೆಲದನಿ
ಜ್ಯೋತಿರಾವ್ ಫುಲೆ | ವಸಾಹತು ಮತ್ತು ಮೇಲ್ವರ್ಗಗಳ ಪ್ರಾಬಲ್ಯವನ್ನು ಪ್ರಶ್ನಿಸಿಸುವ ನೆಲೆಗಳು
- ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಜ್ಯೋತಿರಾವ್ ಫುಲೆಯವರ ಚಿಂತನೆಗಳನ್ನು ಸಬಾಲ್ಟರ್ನ್ ಓದು ಕಣ್ನೋಟದಲ್ಲಿಟ್ಟು ನೋಡುವ ಕೆಲವು ಅಧ್ಯಯನಗಳು ಈಗಾಗಲೇ ಬಂದಿರುತ್ತವೆ. ಆದರೆ ಫುಲೆಯವರ ಚಿಂತನೆಯ ಸಾಧ್ಯತೆಗಳನ್ನು ಗುರುತಿಸುವುದಕ್ಕಿಂತ, ಅವುಗಳಲ್ಲಿ ಅಡಗಿರುವ ಎಪಿಸ್ಟಮಾಲಜಿಕಲ್ ಬಿಕ್ಕಟ್ಟುಗಳನ್ನು ಹಾಗೂ ತಾತ್ವಿಕ ಸಮಸ್ಯೆಗಳನ್ನು ಬಿಡಿಸಿ ನೋಡುವ ಪ್ರಯತ್ನವನ್ನು ಈ ಅಧ್ಯಯನಗಳಲ್ಲಿ ಮಾಡಲಾಗಿದೆ. ಹಾಗೂ ವಸಾಹತು ಪ್ರಭುತ್ವಕ್ಕೆ ಫುಲೆಯವರು ನಿಷ್ಠರಾಗಿದ್ದರು ಎಂಬ ಆರೋಪವನ್ನು ಇವರ ಮೇಲೆ ಹೇರಲಾಗಿದೆ.
ಅದೇನೆಯಿರಲಿ, ‘ಬ್ರಾಹ್ಮಣಾಚ ಕಸಬ್ (1869), ‘ಗುಲಾಮಗಿರಿ (1873) ಮೊದಲಾದ ತಮ್ಮ ಬರಹಗಳಲ್ಲಿ ಫುಲೆಯವರು, ‘ಶೂದ್ರ-ಅತಿಶೂದ್ರ’ ಪ್ರಜ್ಞೆಯನ್ನು ಎಚ್ಚರಗೊಳಿಸುವ ಅತ್ಯಂತ ಮಹತ್ವದ ಕೆಲಸವನ್ನು ಇವರು ಮಾಡಿರುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಸಬಾಲ್ಟರ್ನ್ ಓದಿನ ಪ್ರಾಥಮಿಕ ಕಣ್ನೋಟವೇ ಸಮೂಹ ಮತ್ತು ವ್ಯಕ್ತಿಪ್ರಜ್ಞೆಯನ್ನು ಜಾಗ್ರತಗೊಳಿಸುವುದು ಮತ್ತು ಆ ಮೂಲಕ ಅವರಲ್ಲಿ ಅವರವರ ಅಸ್ಮಿತೆ, ಅಸ್ತಿತ್ವ ಹಾಗೂ ರಾಜಕೀಯ ನಿಲುವುಗಳನ್ನು ಗುರುತಿಸುವ ಬಗೆಯಾಗಿರುತ್ತದೆ.
ಏಕೆಂದರೆ, ಸಬಾಲ್ಟರ್ನ್ ಸಮೂಹಗಳೆಂದು ಇವತ್ತು ನಾವು ಗುರುತಿಸುವ ಬಹುತೇಕ ಸಮೂಹಗಳು ಪ್ರೀ-ಪೊಲಿಟಿಕಲ್ ನೆಲೆಯಲ್ಲಿರುತ್ತವೆ. ಇಂತಹ ನಿಲುವುಗಳನ್ನು ಪಲ್ಲಟಗೊಳಿಸುವ ಅತ್ಯಂತ ಮಹತ್ವದ ಕೆಲಸವು ಈ ಸಬಾಲ್ಟರ್ನ್ ಪ್ರಜ್ಞೆಯನ್ನು ಎಚ್ಚರಗೊಳಿಸುವ ಮೂಲಕ ನೆರವೇರುತ್ತವೆ ಎಂಬುದು ಗಮನಾರ್ಹ. ಇಂತಹವೊಂದು ಮಹತ್ವದ ಕೆಲಸವನ್ನು ಫುಲೆಯವರು ಮಾಡಿರುತ್ತಾರೆ ಅನ್ನುವುದು ವಿಶೇಷ. 19ನೇ ಶತಮಾನದ ಕಾಲ ಮತ್ತು ಚಾರಿತ್ರಿಕ ನಿಲುವುಗಳು ಕೇವಲ ‘ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತದಲ್ಲಿದ್ದವು. ಈ ನಿಲುವು ಇವತ್ತಿಗೂ ಬದಲಾಗಿರುವುದಿಲ್ಲ.
ಇದೊಂದು ತಪ್ಪು ನಡೆಯೆಂದು ನಾನು ವಾದಿಸಲಾರೆ, ಆದರೆ ರಾಷ್ಟ್ರೀಯತೆಯ ಕಲ್ಪನೆಯು ಈ ದೇಶದ ಎಲ್ಲ ಸಮೂಹಗಳನ್ನು ಒಳ್ಗೊಂಡಿರುವ ಬಗೆಯಾಗಿ ಇವತ್ತಿಗೂ ಮುಂದೆ ಬರಲಿಲ್ಲ. ಹೊರತಾಗಿ ತಾರತಮ್ಯ ಮತ್ತು ಅಸಮಾನ ರಚನೆಗಳನ್ನೇ ನಿರಂತರಗೊಳಿಸುವ ಬಗೆಯಾಗಿ, ಇವತ್ತಿಗೂ ಇದು ಮುಂದುವರೆದಿದೆ. ಹಾಗಾಗಿ ಫುಲೆಯವರ ಚಿಂತನೆಗಳು ಸಬಾಲ್ಟರ್ನ್ ಅಧ್ಯಯನ ಸನ್ನಿವೇಶದಲ್ಲಿ ಮಹತ್ವವನ್ನು ಪಡೆಯುತ್ತವೆ. ಪರಿಣಾಮವಾಗಿ, ಫುಲೆಯವರ ತಿಳುವಳಿಕೆಗಳಲ್ಲಿ, ಈಗಾಗಲೇ ಚರಿತ್ರೆ, ಸಂಸ್ಕೃತಿ ಚಿಂತನೆಗಳಲ್ಲಿ ನೆಲೆನಿಂತಿರುವ ಏಕಾಕೃತಿಯ ನಿಲುವುಗಳಿಗೆ ಬದಲಾಗಿ, ಈ ದೇಶದ ಬಹುತ್ವದ ಸಾಮಾಜಿಕ, ಸಾಂಸ್ಕೃತಿಕ ವಿನ್ಯಾಸಗಳನ್ನು ಗುರುತಿಸುವ ಇರಾದೆಯನ್ನು ಕಾಣುತ್ತೇವೆ.
ಅಂದರೆ ಶೂದ್ರ, ಅತಿಶೂದ್ರ ಪ್ರಜ್ಞೆಯ ಮೂಲಕ ಚರಿತ್ರೆಯೊಳಗೆ ಹುದುಗಿರುವ ಹಿಂಸೆ ಮತ್ತು ಯಜಮಾನಿಕೆಯ ವಿನ್ಯಾಸಗಳನ್ನು ಇವರು ಗುರುತಿಸಿರುತ್ತಾರೆ. ದಿಟ, ಫುಲೆಯವರು ತಳ/ದಲಿತ/ಶೂದ್ರ ಸಮೂಹಗಳಲ್ಲಿ ಸಬಾಲ್ಟರ್ನ್ ಪ್ರಜ್ಞೆಯನ್ನು ಬೆಳೆಸುವಲ್ಲಿ ಸಫಲವಾಗಲಿಲ್ಲ ಎಂಬ ಆರೋಪಗಳನ್ನು ಮಾಡಲಾಗುತ್ತದೆ. ವಸಾಹತು ಪ್ರಭುತ್ವದ ಪ್ರಾಬಲ್ಯ ಮತ್ತು ಅಧಿಕಾರದ ಹಂಗಿನಲ್ಲಿದ್ದ ಸನ್ನಿವೇಶದಲ್ಲಿ ಫುಲೆಯವರು ರೂಪಿಸಿದ ಈ ಚಿಂತನೆಗಳಿಗೆ ಬಹದೊಡ್ಡ ವ್ಯಾಪ್ತಿಯಿದೆ.
ಏಕೆಂದರೆ ಚಾರಿತ್ರಿಕ ವಾಸ್ತವಗಳು ಕೇವಲ ರಾಜಕೀಯವಾಗಿ ಮಾತ್ರ ಒಗ್ಗೂಡಿರುತ್ತವೆ ಹಾಗೂ ಪಳಗಿರುತ್ತವೆ ಎಂಬ ದಿಟವನ್ನು ನಾವು ಗಮನಿಸಬೇಕು. ‘ಸತ್ಯಶೋಧಕ ಸಮಾಜ’ದ ಮೂಲಕ ನಮ್ಮ ಬಹು ಸಮೂಹಗಳ ಸಾಮಾಜಿಕ ವಿನ್ಯಾಸಗಳಲ್ಲಿ ಹುದುಗಿರುವ ಪ್ರಾಬಲ್ಯ ಮತ್ತು ಅಧೀನತೆಯ ಸಂಬಂಧಗಳ ಮೂಲಗಳನ್ನು ಹುಡುಕುವ ಮಹತ್ವದ ಕೆಲಸವನ್ನೂ ಇವರು ಕೈಗೊಂಡಿದ್ದರು.
ಎರಡು ಬಗೆಯಲ್ಲಿ ಸಮೂಹಗಳ ಪ್ರಜ್ಞೆಯನ್ನು ಎಚ್ಚರಗೊಳಿಸುವ ನಿಲುವುಗಳನ್ನು ಸತ್ಯಶೋಧಕ ಸಮಾಜದ ಮೂಲಕ ನೆರವೇರಿಸಲಾಗುತಿತ್ತು. ಒಂದು ಶಿಕ್ಷಣ ಮತ್ತೊಂದು ಸಾಮಾಜಿಕ-ರಾಜಕೀಯ ಪ್ರಜ್ಞೆ ಎಂದು ಈ ನಿಲುವುಗಳನ್ನು ಗುರುತಿಸಬಹುದು. ಈ ಎರಡೂ ನಿಲುವುಗಳು ಸಮೂಹಗಳ ಪ್ರತಿನಿಧೀಕರಣದ ಅಯಾಮಗಳನ್ನು ಖಚಿತಗೊಳಿಸುವುದಕ್ಕೇ ಅತ್ಯಂತ ಒತ್ತಾಸೆಯಾಗಿದ್ದವು. ರಾಜಕೀಯ-ಸಾಮಾಜಿಕ ಹಾಗೂ ನಮ್ಮ ಚರಿತ್ರೆಯನ್ನು ಕಟ್ಟಿಕೊಳ್ಳುವುದಕ್ಕೆ ಅಗತ್ಯವಾದ ಬಂಡಾಯದ ಮಾದರಿಗಳು ಫುಲೆಯವರ ಚಿಂತನೆಗಳಲ್ಲಿ ನಿಚ್ಚಳವಾಗಿ ಮೂಡಿಬಂದಿರುತ್ತವೆ.
ಅಂಬೇಡ್ಕರ್ ಅವರ ಪ್ರಭಾವ ಹಾಗೂ ಆಲೋಚನೆಗಳ ಪರಿಣಾಮವಾಗಿ, ಭಾರತ/ಕರ್ನಾಟಕದಲ್ಲಿ ಪ್ರತಿರೋಧದ ಮಾದರಿಗಳನ್ನು ಮರು ವಿನ್ಯಾಸಗೊಳಿಸುವ ನಡೆಗಳು ಅತ್ಯಂತ ತೀವ್ರವಾಗಿ ನಡೆದಿರುವುದನ್ನು ನಾವು ಕಾಣುತ್ತೇವೆ. ದಿಟ, ಕರ್ನಾಟಕದ ಸಾಹಿತ್ಯ ಚರಿತ್ರೆಗಳನ್ನು ಗಮನಿಸಿದರೆ, ಹಲವು ಬಗೆಯ ಪ್ರತಿರೋಧದ ಮಾದರಿಗಳನ್ನು ನಾವು ಗುರುತಿಸುತ್ತೇವೆ.
ಆದರೆ ಪ್ರಜಾಪ್ರಭುತ್ವದ ಸನ್ನಿವೇಶದಲ್ಲಿಯೂ ತಳ-ದಲಿತ-ಶೂದ್ರ ಸಮೂಹಗಳು ಯಾವ ಬಗೆಯ ಬಿಕ್ಕಟ್ಟುಗಳನ್ನು ಎದುರಿಸುತ್ತವೆ ಎಂಬುದನ್ನು ಮನಗಂಡಾಗ, ಅಂಬೇಡ್ಕರ್ ಮತ್ತು ಫುಲೆಯವರಂತವರು ರೂಪಿಸಿದ ಚಿಂತನೆಯ ಮಾದರಿಗಳು, ನಮ್ಮ ಸದ್ಯದ ಚರಿತ್ರೆ, ರಾಜಕಾರಣಗಳು ರೂಪಿಸುವ ಏಕಾಕೃತಿಯ ಮಾದರಿಗಳಿಗೆ ಪ್ರತಿರೋಧವನ್ನು ಒಡ್ಡುವಲ್ಲಿ ಸಂಘಟನೆಗಳು ಹೇಗೆ ಬೆಳೆದುಬಂದವು ಎಂಬುದನ್ನು ಕುರಿತು ಯೋಚಿಸುವ ಜರೂರಿದೆ. ಇಲ್ಲಿ ಇವತ್ತು ನಾವು ಚರ್ಚಿಸುತ್ತಿರುವ ಪ್ರತಿರೋಧದ ಈ ಮಾದರಿಗಳು ಸಾಮಾಜಿಕ ಮತ್ತು ರಾಜಕೀಯ ನೆಲೆಯಿಂದ ಪ್ರೇರಣೆಗಳನ್ನು ಪಡೆದಿರುತ್ತವೆ.
ಸಾಮಾಜಿಕ ಪ್ರೇರಣೆಗಳು ರಾಜಕೀಯ ನೆಲೆಯಿಂದ ಪ್ರತಿರೋಧದ ಮಾದರಿಗಳನ್ನು ರೂಪಿಸುವುದಕ್ಕೆ ಕಾರಣವಾಗಿರುವಂತೆ, ಹಾಗೇನೇ ರಾಜಕೀಯ ಪ್ರೇರಣೆಗಳು ಸಾಮಾಜಿಕವಾಗಿ ಸಂಘಟನೆಗೊಳ್ಳಲೂ ಕಾರಣವಾಗಿರುತ್ತವೆ. ಅಂದರೆ, ಇವುಗಳ ನಡುವೆ ಅದಲು-ಬದಲು ಮಾಡಿಯೂ ನೋಡುವ ಸಾಧ್ಯತೆ ಇದೆ ಎಂಬಂಶವನ್ನು ನಾವಿಲ್ಲಿ ಮನಗಾಣಬೇಕಿದೆ.
ಈ ದೆಸೆಯಲ್ಲಿ ಪ್ರತಿರೋಧದ ಮಾದರಿಗಳನ್ನು ಚರ್ಚಿಸುವುದಾದರೆ, 1970ರ ದಶಕದಲ್ಲಿ, ಕರ್ನಾಟಕದಲ್ಲಿ ಮುಂಚೂಣಿಗೆ ಬಂದಂತಹ ‘ಕರ್ನಾಟಕ ದಲಿತ ಸಂಘರ್ಷ ಸಮಿತಿ’ (ಬಿ, ಕೃಷ್ಣಪ್ಪ,) ಹಾಗೂ ‘ಬೂಸಾ ಚಳುವಳಿ’ಗಳ (ಬಿ.ಬಸವಲಿಂಗಪ್ಪನವರು) ಪರಿಣಾಮಗಳನ್ನು ಕುರಿತು ಇವತ್ತು ಯೋಚಿಸಿಬೇಕಿದೆ. ಆದರೆ ಇವುಗಳ ಬಗೆಗೆ ಇವತ್ತು ನಾವು ಹಲವು ರೀತಿಯ ಫಲಿತಗಳನ್ನು ಕಾಣುತ್ತೇವೆ.
ಆದರೆ ಈ ಸಂಘಟನೆಗಳು ಹುಟ್ಟು ಹಾಕಿರುವ ವೈಚಾರಿಕ ವಿನ್ಯಾಸಗಳು ಮಾತ್ರ ಹಲವು ಸಾಮಾಜಿಕ-ರಾಜಕೀಯ ಪಲ್ಲಟಗಳಿಗೆ ಕಾರಣವಾಗಿರುತ್ತವೆ. ಅಂದ ತಕ್ಷಣವೇ, ಇವತ್ತು ಈ ಸಂಘಟನೆಯೊಳಗೆ ಏರ್ಪಟ್ಟಿರುವ ಬಿರುಕುಗಳನ್ನು ಮಾತ್ರ ದೊಡ್ಡದಾಗಿ ಬೆಟ್ಟುಮಾಡಿ ತೋರಿಸುವ ಧೋರಣೆಗಳನ್ನು ನೋಡುತ್ತೇವೆ. ಆದರೆ ಈ ಸಂಘಟನೆಗಳು ಉಂಟುಮಾಡಿರುವ ಪರಿಣಾಮಗಳು ನಗಣ್ಯವಾಗುತ್ತವೆ ಮತ್ತು ಚಾರಿತ್ರಿಕವಾಗಿ ಸೋಲೊಪ್ಪುವ ನೆಲೆಗಳಿಗೆ ಇವುಗಳನ್ನು ಗುರಿಮಾಡುತ್ತೇವೆ.
ಇದಕ್ಕೆ ಎರಡು ಬಗೆಯ ಕಾರಣಗಳನ್ನು ಇಲ್ಲಿ ಕಂಡುಕೊಳ್ಳಬಹುದು. ಇಂತಹ ಸಂಘಟನೆಗಳ ತಾತ್ವಿಕತೆ ಮತ್ತು ಪರಿಕರಗಳ ವಿನ್ಯಾಸದಲ್ಲಿಯೇ ಲೋಪಗಳಿವೆ ಎಂಬುದು ಒಂದು ಕಾರಣವಾದರೆ, ಮತ್ತೊಂದು ಕಾರಣವು, ಈ ಸಂಘಟನೆಯೊಳಗೆ ಸೇರಿರುವ ಜಾತಿ ಮತ್ತು ಒಳಪಂಗಡಗಳ ನಡುವಣ ಅಧಿಕಾರ ಸಂಬಂಧದ ನೆಲೆಗಳು ಎಂದೇ ಹೇಳಬಹುದಾಗಿದೆ. ಏಕೆಂದರೆ, ರಾಜಕೀಯ ಅಧಿಕಾರದ ಮೇಲಾಟದಲ್ಲಿ ಎದುರಾಗುವ ಪರಿಣಾಮಗಳು ಎಂತಹವು ಎಂಬುದನ್ನು ಇವತ್ತು ಊಹಿಸುವುದಕ್ಕೂ ಕಷ್ಟ. ಇವತ್ತು ಇಡೀ ಭಾರತದುದ್ದಕ್ಕೂ ಕಾಣುವ ರಾಜಕೀಯ ಧೃವೀಕರಣದ ಮಾದರಿಗಳನ್ನು ನೋಡಿದರೆ, ಈ ಕಷ್ಟದ ಹಿಂದಿನ ನೆಲೆಗಳು ನಮಗೆ ನಿಚ್ಚಳವಾಗಿ ತೋರುತ್ತವೆ.
ಯಾವ ಸಾಮಾಜಿಕ-ಸಾಂಸ್ಕೃತಿಕ ಮತ್ತು ರಾಜಕೀಯ ನಿಲುವುಗಳನ್ನು ವಿರೋಧಿಸಲೆಂದು ಈ ಸಂಘಟನೆಗಳು ಹುಟ್ಟಿಕೊಂಡಿದ್ದವೋ ಅದನ್ನೆಲ್ಲ ಮರೆತು ಅಧಿಕಾರದ ಅಧೀನತೆಗೆ ಒಳಗಾಗುತ್ತಿವೆ. ಅಂದರೆ ಇದು ದಲಿತ ಮತ್ತು ಹಿಂದುಳಿದ ಸಮೂಹಗಳಿಗೆ ಅಧಿಕಾರವನ್ನು ನಿರಾಕರಿಸುವುದಲ್ಲ. ಬದಲಾಗಿ, ಯಾರು ಇದುವರೆಗೂ ಅಧಿಕಾರ ಕೇಂದ್ರಗಳಲ್ಲಿ ನೆಲೆಗೊಂಡು, ತಳ-ದಲಿತ-ಶೂದ್ರ ಸಮೂಹಗಳನ್ನು ಶೋಷಣೆಗೆ ಈಡು ಮಾಡಿದ್ದವೋ, ಅಂತಹ ಸಮೂಹಗಳು ರೂಪಿಸುವ ರಾಜಕೀಯ ಅಧಿಕಾರಕ್ಕೆ ಈ ಎಲ್ಲ ತಳ-ದಲಿತ-ಶೂದ್ರ ಸಮೂಹಗಳು ಅಸ್ತ್ರಗಳಾಗಿ ಬಳಕೆಯಾಗುತ್ತವೆ.
ಇವರಿಗೆ ಅಧಿಕಾರವೆಂಬುದು ಮಾಧ್ಯಮವಾಗಬೇಕು ಮತ್ತು ಸಾಮಾಜಿಕ ಸ್ವಾಯತ್ತತೆಯನ್ನು ತಂದುಕೊಡುವ ಸಾಮಾಜಿಕ ವಿನ್ಯಾಸವಾಗಬೇಕು. ಈ ಕಾರಣದಿಂದ ಈ ಎಲ್ಲ ಸಬಾಲ್ಟರ್ನ್ ಸಮೂಹಗಳಿಗೆ ಇವತ್ತು ಬೇಕಾಗಿರುವುದು ಹೊಸ ಸಾಮಾಜಿಕ ವ್ಯವಸ್ಥೆಯೇ ಹೊರತು, ಕೇವಲ ಅಧಿಕಾರವಲ್ಲ. ಅಂದರೆ, ಸಾಮಾಜಿಕ ರಚನೆಯಲ್ಲಿಯೇ ಶೋಷಣೆಯ ಮಾದರಿಗಳನ್ನು ಅಡಕಗೊಳಿಸುವಂತೆ, ಈ ಹೊಸ ಸಾಮಾಜಿಕ ವ್ಯವಸ್ಥೆಯಲ್ಲಿಯೇ, ಎಲ್ಲ ತಳ-ದಲಿತ-ಶೂದ್ರ ಸಮೂಹಗಳು ಹಸನಾಗಿ ಬದುಕುವುದಕ್ಕೆ ಬೇಕಾದ ಅಧಿಕಾರ ಮತ್ತು ಜ್ಞಾನಶಿಸ್ತುಗಳನ್ನು ನೆಲೆಗೊಳಿಸುವ ಅಗತ್ಯವಿದೆ.
ಈಗಾಗಲೇ ಹೇಳಿದಂತೆ, ಚರಿತ್ರೆ, ಮೀಮಾಂಸೆಗಳಂತಹ ಜ್ಞಾನಶಿಸ್ತುಗಳನ್ನು ರೂಪಿಸುವ ನಿಟ್ಟಿನಲ್ಲಿ ಹೋರಾಟಗಳು ಇಲ್ಲವೇ ಚಳವಳಿಗಳು ತಲೆಯೆತ್ತಬೇಕಿದೆ. ಇವುಗಳು ಕೇವಲ ರಾಜಕೀಯ ಸರಿತನ ಇಲ್ಲವೇ ಕಾನೂನುಗಳನ್ನು ಜಾರಿಗೊಳಿಸುವುದಷ್ಟಕ್ಕೆ ಮಾತ್ರ ಸೀಮಿತಗೊಳ್ಳುವುದು ಸರಿಯಾದ ನಿಲುವಲ್ಲ.
ಅದೇನೇ ಇರಲಿ, ದಲಿತ ಸಂಘರ್ಷ ಸಮಿತಿ ಮತ್ತು ಬೂಸಾ ಚಳುವಳಿಗಳು ಸಾಂಸ್ಕೃತಿಕ ಮೀಮಾಂಸೆ, ಚರಿತ್ರೆ, ರಾಜಕೀಯ ತತ್ವಗಳ ಮೂಲಭೂತವಾದವನ್ನು ಪಲ್ಲಟಗೊಳಿಸುವ ಕೆಲಸವನ್ನು ಮಾಡಿರುವುದನ್ನು ಮರೆಯುವಂತಿಲ್ಲ. ಆದರೆ ಇವುಗಳು ಬೌದ್ಧಿಕ ಸ್ವಾಯತ್ತತೆಯನ್ನು ರೂಪಿಸುವಷ್ಟು ಬಲವಾಗಿ ಬೆಳೆದಿಲ್ಲವೆಂಬುದು ಕೂಡ ಅಷ್ಟೇ ದಿಟವಾದ ಸಂಗತಿಯಾಗಿದೆ. ಈಚೆಗೆ ನಡೆದ ಚಲೋ-ಉಡುಪಿಯಂತಹ ಹೋರಾಟಗಳೂ ಒಂದು ರಾಜಕೀಯ ಪರಿಣಾಮವನ್ನು ಬೀರಿರುತ್ತವೆ.
ಆದರೆ ಈ ಪರಿಣಾಮವು ಕೇವಲ ಒಂದು ಚಾರಿತ್ರಕ ಬೆಳವಣಿಗೆಯಾಗಿ ಇರುತ್ತದೆಯೇ ಹೊರತು ಈಗಾಗಲೇ ಅಸ್ತಿತ್ವದಲ್ಲಿರುವ ಯಾವುದೇ ಬಗೆಯ ಚಾರಿತ್ರಿಕ ತಿಳಿವು ಮತ್ತು ನಂಬಿಕೆಗಳನ್ನು ಪಲ್ಲಟಗೊಳಿಸುವಲ್ಲಿ ಅತ್ಯಂತ ಪ್ರಬಲವಾದ ವಿದ್ಯಮಾನವಾಗುವುದಿಲ್ಲ. ಏಕೆಂದರೆ ತಳ-ದಲಿತ-ಶೂದ್ರ-ಅಲ್ಪಸಂಖ್ಯಾತ ಸಮೂಹಗಳನ್ನು ಒಟ್ಟಾಗಿ ರಾಜಕೀಯ ಮತ್ತು ಸಾಮಾಜಿಕ ಶಕ್ತಿಯನ್ನಾಗಿ ಪ್ರದರ್ಶಿಸುವುದಕ್ಕೆ ಬೇಕಾದ ಸಿದ್ಧತೆಗಳು ನಮ್ಮಲ್ಲಿ ಇನ್ನೂ ಸಜ್ಜುಗೊಂಡಿಲ್ಲ.
ಇಂತಹ ವ್ಯವಸ್ಥೆಯು ಎರಡು ಬಗೆಯಲ್ಲಿ ನೆರವೇರುತ್ತದೆ. ಒಂದು ಬೌದ್ಧಿಕ ನೆಲೆಯಿಂದ ಮತ್ತೊಂದು ಸಾಮಾಜಿಕ-ರಾಜಕೀಯ ನೆಲೆಯಿಂದ ಎಂದು ಹೇಳಬಹುದು. ಇವೆರಡೂ ಪೂರಕವಾಗಿ ನಡೆಯುವ ಅವಶ್ಯಕತೆ ಇರುತ್ತದೆ. ಕೇವಲ ಬೌದ್ಧಿಕ ಇಲ್ಲವೇ ರಾಜಕೀಯ ಹೋರಾಟಗಳಿಂದ ನಮ್ಮ ಸಾಮಾಜಿಕ-ರಾಜಕೀಯ ವ್ಯವಸ್ಥೆಗಳನ್ನು ರೂಪಾಂತರಿಸುವ ಕೆಲಸವು ನಡೆಯಲಾರದು.
ಬೌದ್ಧಿಕತೆ ಎಂಬುದು ಪರಮಸತ್ಯವಲ್ಲ ದಿಟ. ಆದರೆ ಬೌದ್ಧಿಕ ಕ್ರಿಯಾಶೀಲತೆಯು ನಮ್ಮ ಪ್ರಜ್ಞೆಯನ್ನು ಎಚ್ಚರಿಸಬಲ್ಲದು ಅನ್ನುವುದು ಮಾತ್ರ ದಿಟ. ಆದರೆ ಕರ್ನಾಟಕ ಇಲ್ಲವೇ ಒಟ್ಟಾರೆ ಭಾರತದಲ್ಲಿ ‘ನಿನ್ನೆಗಳ ಮರುರಚನೆ’ಯಲ್ಲಿ ಹುದುಗಿರುವ ತಾತ್ವಿಕ ಲೋಪಗಳಿಂದ, ಈ ಬೌದ್ಧಿಕತೆ ಎಂಬುದು ಕೇವಲ ಶೈಕ್ಷಣಿಕ ಕಸರತ್ತಾಗಿ ಕಂಡುಬಂದಿದೆ. ಹಾಗಾಗಿ ಕರ್ನಾಟಕದ ನಿನ್ನೆಗಳ ಮರುರಚನೆಯ ವಿನ್ಯಾಸಗಳನ್ನು ಕುರಿತು ಇಂದು ವಿಶ್ಲೇಷಿಸುವ ಜರೂರಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243