ಲೋಕಾರೂಢಿ
ಕಾಡುಗೊಲ್ಲರ ಹಟ್ಟಿ ಮತ್ತು ದೇಶಕಾಲದ ಸಂಕಷ್ಟ
- ಕೇಸರಿ ಹರವೂ
ಕಾಡುಗೊಲ್ಲರಹಟ್ಟಿಗೆ ಸಂಸದರೊಬ್ಬರು ಪ್ರವೇಷಿಸಲು ಹೊರಟಾಗ ಅವರನ್ನು ಆ ಹಟ್ಟಿಯ ಗೊಲ್ಲರು ತಡೆದರು. ಆಗ ವರದಿಯಾಗಿರುವಂತೆ ಅದಕ್ಕೆ ಮುಖ್ಯ ಕಾರಣ ಆ ಸಂಸದರು ಪರಿಶಿಷ್ಠ ಜಾತಿಗೆ ಸೇರಿದ ಅಸ್ಪೃಶ್ಯರು ಎನ್ನುವುದು. ಇದು ಜಾತಿವ್ಯವಸ್ಥೆಯ ಕರಾಳ ನಿದರ್ಶನ, ಪರಿಶಿಷ್ಟ ಜಾತಿ ಮತ್ತು ವರ್ಗಗಳ ಸಂಘರ್ಷ ಎಂದು ಮೇಲ್ನೋಟಕ್ಕೆ ಕಾಣುತ್ತದೆ. ಆಮೇಲೆ ಅವರೇ ಆ ಸಂಸದರಿಗೆ ಪೂರ್ಣಕುಂಭ ಸ್ವಾಗತ ನೀಡಿದರು ಎನ್ನುವುದು ಬೇರೇ ವಿಷಯ. ಆದರೆ ಈ ಪ್ರಕರಣ ಅಷ್ಟಕ್ಕೇ ನಿಲ್ಲದೇ ಹಲವು ಆಯಾಮಗಳ ಚರ್ಚೆಗೆ ಆಸ್ಪದ ನೀಡುತ್ತದೆ.
ಸಾಮಾಜಿಕ ಮಾಧ್ಯಮಗಳಲ್ಲಿಯೂ ಸೇರಿದಂತೆ ಈ ಸುದ್ದಿಯ ಬೆನ್ನುಹತ್ತಿ ವಿವಿಧ ಬಗೆಯ ಚರ್ಚೆಗಳು ಆರಂಭವಾದವು. ಸಂಪ್ರದಾಯ, ನಂಬಿಕೆಗಳು, ಆಧುನಿಕತೆ, ಅಭಿವೃದ್ಧಿ, ಅಸ್ಪೃಷ್ಯತೆ ಮತ್ತು ನಿವಾರಣೆ, ಜಾತಿ ವ್ಯವಸ್ಥೆ ಮತ್ತು ನಿರ್ಮೂಲನ, ಸಮಸಮಾಜ, ಹೀಗೆ ಬೇರೆಬೇರೇ ನೆಲೆಗಳಲ್ಲಿ ಈ ಚರ್ಚೆಗಳು ಸಾಗಿದವು. ಇವು ಚರ್ಚಾರ್ಥಿಗಳ ನಿಲುವುಗಳ ಅನುಸಾರ ಸಾಮಾಜಿಕ, ರಾಜಕೀಯ ಬಣ್ಣಗಳನ್ನೂ ಪಡೆದಿವೆ. ಬಹುಶಃ ನಾವು ಯಾವ ಭೂಪ್ರದೇಶದ ಯಾವ ಕಾಲದಲ್ಲಿ ನಿಂತು ಮಾತಾಡುತ್ತಿದ್ದೇವೆ ಎಂದು ನೋಡಿಕೊಂಡು ಚರ್ಚೆ ಮುಂದುವರಿಸಬೇಕು ಎನಿಸುತ್ತದೆ.
ಬುಡಕಟ್ಟು ಸಮುದಾಯವೊಂದು ತನ್ನ ಲೋಕಕಾಣ್ಕೆಗೆ (worldview) ಇಂದಿಗೂ ಅಂಟಿಕೊಂಡು ತನ್ನ ಮೂಲ ಆಚಾರ, ವಿಚಾರ, ನಂಬಿಕೆ, ಸಂಪ್ರದಾಯಗಳನ್ನು ಪಾಲಿಸುತ್ತಿದೆಯಾದರೆ ಈ ಚರ್ಚೆ ಒಂದು ರೂಪ ಪಡೆಯುತ್ತದೆ. ತನ್ನತನಗಳಲ್ಲಿ ಕೆಲವನ್ನು ಉಳಿಸಿಕೊಂಡು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ತನಗೆ ಅನುಕೂಲವಾಗುವಷ್ಟರ ಮಟ್ಟಿಗೆ ಆಧುನಿಕತೆಗೆ, ನಾಗರೀಕತೆಗೆ ಮುಕ್ತವಾಗಿದೆ ಎಂದಾದರೆ ಇದೇ ಚರ್ಚೆ ಮತ್ತೊಂದು ಧಾಟಿಯಲ್ಲಿ ಸಾಗುತ್ತದೆ. ಆಧುನಿಕ ಸಮಾಜದಲ್ಲಿ ಮೊದಲನೆಯ ಸಾಧ್ಯತೆ ತೀರಾ ಕಡಿಮೆ. ಕಾಡುಗೊಲ್ಲ ಹಟ್ಟಿಯ ಜನ ಕೃಷಿ, ಆಹಾರ ಪದ್ಧತಿ, ಉಡುಗೆ, ವಸತಿ, ಶಿಕ್ಷಣ, ನಾಗರೀಕ ಸರಬರಾಜು, ಆರೋಗ್ಯ, ನೈರ್ಮಲ್ಯ, ಮೀಸಲಾತಿ ಮುಂತಾದ ಆಧುನಿಕ ನಾಗರೀಕ ವ್ಯವಸ್ಥೆಗಳಿಗೆ ಮತ್ತು ದೇಶದ ಸಾಮಾಜಿಕ-ಆರ್ಥಿಕ-ರಾಜಕೀಯ ವ್ಯವಸ್ಥೆಗೆ ತಮ್ಮನ್ನು ತಾವು ತೆರೆದುಕೊಂಡಿದ್ದಾರೆ ಎಂದರೆ, ಅವನ್ನೇ ಅವಲಂಬಿಸಿದ್ದಾರೆ ಎಂದರೆ ಇವರ ಸ್ಪೇಸ್ ಯಾವುದು? ಇವರ ತಾಣ ಈಗಲೂ ಕಾಡೇ ಮತ್ತು ಕಾಡಿನ ಅಂಚೇ? ಇವರು ನೆಚ್ಚಿಕೊಂಡಿದ್ದ ಕಾಡು ಮತ್ತು ಅಂಚು ಹಾಗೇ ಉಳಿದುಕೊಂಡು ಇವರ ಸ್ವಾವಲಂಬೀ ಬದುಕನ್ನು ಸಂಪೂರ್ಣ ಪೋಷಿಸುತ್ತಿದೆಯೇ? ಆಧುನಿಕ ಜಗತ್ತು ಅದನ್ನು ಹಾಗೆ ಉಳಿಸಿದೆಯೇ? ಇವರ ಜೀವನಕ್ರಮ ಈಗಲೂ ಇವರಿಗೇ ಸಲ್ಲುವಷ್ಟು ನಿಸರ್ಗ ವಿಶಿಷ್ಟವಾಗಿಯೇ ಇದೆಯೇ? ಇದ್ಯಾವುದೂ ಅಲ್ಲ ಎನ್ನುವುದಾದರೆ ಆಗ ಇವರು ನಿಶ್ಚಿತವಾಗಿಯೂ ತಮ್ಮ ಸ್ಪೇಸ್ ಅನ್ನು ಕಳಕೊಂಡು ಅಥವಾ ಬಿಟ್ಟುಕೊಟ್ಟು ಆಧುನಿಕ, ನಾಗರೀಕ ಸ್ಪೇಸ್ ಗೆ ಸ್ಥಳಾಂತರವಾಗಿದ್ದಾರೆ, ನಾಗರೀಕ ಕಾಲಕ್ಕೆ ಕಾಲಾಂತರಗೊಂಡಿದ್ದಾರೆ. ಈ ಸ್ಥಿತ್ಯಂತರಗಳು ಈ ಸಮುದಾಯಗಳಲ್ಲಿ ಜಾತಿವ್ಯವಸ್ಥೆಯ ಕೆಲವು ಕಟ್ಟುಪಾಡುಗಳೂ ಸೇರಿದಂತೆ ಹಲವು ರೀತಿಯ ಕೊಡುಕೊಳ್ಳುವಿಕೆಗಳನ್ನು ತಂದಿವೆ. ಇದನ್ನು ದೇಶವೂ, ಜನಾಂಗವೂ, ನಾಗರಿಕ ಸಮಾಜವೂ ಗುರುತಿಸಿಕೊಳ್ಳಬೇಕಾಗುತ್ತದೆ. ಇದು ಬುಡಕಟ್ಟು ಸಮಾಜಕ್ಕೆ ಮಾತ್ರವಲ್ಲ, ಸಾಂಪ್ರದಾಯಿಕ ಮತ್ತು ಆಧುನಿಕ ತಾಕಲಾಟಗಳಲ್ಲಿ ತೊಡಗಿರುವ ಎಲ್ಲ ಸಮಾಜಗಳಿಗೂ ಇದು ಅನ್ವಯಿಸುತ್ತದೆ.
ಅಂಡಮಾನಿನ ಸೆಂಟೆನೆಲೀಸ್ ಜನರಂತಹ ಸಮಾಜಗಳು ಮತ್ತು ಅವರ ಲೋಕಕಾಣ್ಕೆಗಳು ನಮ್ಮ ಆಧುನಿಕ ನಾಗರೀಕತೆಯ ಸ್ಪೇಸ್ ಅನ್ನೇ ಒಪ್ಪಿಕೊಳ್ಳುವುದಿಲ್ಲ. ಇವು ನಾಗರೀಕ ಮನುಷ್ಯನ ನವ್ಯಪೂರ್ವ ಮತ್ತು ನವ್ಯ ಜೀವನಕ್ರಮಗಳ ಕುರಿತ ಚರ್ಚೆಗೆ ತೆರೆದುಕೊಡುತ್ತವೆ. ನವೋತ್ತರ ಚಿಂತನೆಗಳಿಗೆ ಅಡಿಪಾಯ ಹಾಕುತ್ತವೆ. ಅದು ಬೇರೆಯೇ ಚರ್ಚೆ. ಅದನ್ನು ಚರ್ಚಿಸುವುದು ಇಲ್ಲಿಯ ಉದ್ದೇಶವಲ್ಲ. ಆದರೆ ನಾಗರೀಕತೆಗೆ ಅತ್ಯಂತ ನಿಕಟವಾಗಿ ಬದುಕುತ್ತಿರುವ ಕಾಡುಗೊಲ್ಲರಂಥಾ ಸಮಾಜಗಳ ವಿಷಯ ಬೇರೆಯೇ. ನಾಗರೀಕತೆಯ ನಿರಂತರ ವಿಸ್ತಾರದ ಹಂಬಲ ಹೊತ್ತ ಆಧುನಿಕ ಸಾಮಾಜಿಕ-ಅರ್ಥ ರಾಜಕೀಯ ಈ ಸಮುದಾಯಗಳನ್ನು ತಮ್ಮಷ್ಟಕ್ಕೆ ತಾವು ಇರಲು ಬಿಟ್ಟಿಲ್ಲ ಎನ್ನುವುದು ಒಂದು ಮಾತು. ಮಾನವನ ನಿರಂತರ ಆವಿಷ್ಕಾರ ಮತ್ತು ಪ್ರಗತಿಯ ಸಹಜ ವಾಂಛೆಯ ಕಾರಣದಿಂದಾಗಿ ಕೂಡ ಜನಾಂಗವೊಂದು ಆಂತರಿಕವಾಗಿಯೂ ತಾನಿರುವಂತೆಯೇ ಇರಲು ಬಯಸಿಲ್ಲ ಎನ್ನುವುದು ಅದರ ಹಿಂದೆಯೇ ಬರುವ ಮಾತು. ಕಾಡು ನಿರ್ವಹಣೆಗೆ ಮತ್ತು ಖೆಡ್ಡಾಕ್ಕೆ ಅನುಕೂಲವಾಗುವಂತೆ ಸೋಲಿಗರನ್ನು ಮತ್ತು ಜೇನುಕುರುಬರನ್ನು ಮೈಸೂರು ಅರಸರು ಒಲಿಸಿಕೊಂಡ ಬಗೆ ಅಲ್ಪಸ್ವಲ್ಪ ದ್ರವ್ಯ, ಸವಲತ್ತುಗಳನ್ನು ಕೊಡಮಾಡುವುದೇ ಆಗಿತ್ತು. ಹಾಗೆಯೇ, ತೀರಾ ಸಣ್ಣ ಸವಲತ್ತು ಕೂಡಾ ಈ ಜನಗಳನ್ನು ಅರಸರ ಲಾಭಾಸಕ್ತಿಗಳೊಂದಿಗೆ ಸಹಕರಿಸುವಂತೆ ಮಾಡಿತ್ತು.
ಈಗ ಕಾಡುಗೊಲ್ಲರ ಹಟ್ಟಿಯೊಳಕ್ಕೆ ಹೋಗಲು ಹೊರಟಿದ್ದ ಜನಪ್ರತಿನಿಧಿಯನ್ನು ಹಟ್ಟಿಯೊಳಕ್ಕೆ ಬಿಟ್ಟುಕೊಳ್ಳಲಿಲ್ಲ ಎನ್ನುವುದನ್ನು ಪ್ರಗತಿಪರ ಸಮಾಜ ಬಹುವಾಗಿ ಜಾತಿ ವ್ಯವಸ್ಥೆ, ನಾಗರೀಕತೆ ಮತ್ತು ಸಂವಿಧಾನ – ಈ ಅಂಶಗಳ ಮೂಲಕವೇ ಅರ್ಥೈಸಲು ಯತ್ನಿಸಿತು. ಸಮುದಾಯ ಸುಧಾರಣೆಯ ಆಶಯ ಹೊತ್ತು ಹೋದಾಗಲೂ ಜಾತಿ ವ್ಯವಸ್ಥೆ, ಅಸ್ಪೃಶ್ಯತೆಗಳೇ ಹೆಚ್ಚಾಗಿ ಪ್ರಗತಿಯನ್ನು ದೂರತಳ್ಳಿವೆ ಎನ್ನುವ ಆತಂಕವನ್ನೂ ಅದು ಹೊರಹಾಕಿತು. ಇಲ್ಲಿ ಆ ಜನಪ್ರತಿನಿಧಿ ಯಾವ ಪಕ್ಷ, ಸಿದ್ಧಾಂತಕ್ಕೆ ಸೇರಿದವರು ಎನ್ನುವುದಾಗಲೀ, ಸ್ಥಳೀಕರೇ, ಹೊರಗಿನವರೇ ಎನ್ನುವುದಾಗಲೀ ಅಷ್ಟು ಮುಖ್ಯವಲ್ಲ. ಬಹುಶಃ ಬೇರಾವುದೇ ಪಕ್ಷದ, ಪರಿಶಿಷ್ಠ ಜಾತಿಗೆ ಸೇರಿದ ಜನಪ್ರತಿನಿಧಿಯೊಬ್ಬರಿಗೆ ಈ ರೀತಿ ಆಗಿದ್ದರೂ ಸಮಾಜದ ಪ್ರತಿಕ್ರಿಯೆ ಇದೇ ರೀತಿ ಇರುತ್ತಿತ್ತು.
ಆದರೆ ನಾಗರೀಕ ಸಮಾಜದ ವ್ಯವಸ್ಥೆ ಇಂದು ದೇಶದಲ್ಲಿ ಯಾವ ರೀತಿ ಇದೆ? ನಮ್ಮಲ್ಲಿನ ಅನೇಕ ಹಳ್ಳಿಗಳಲ್ಲಿ ಇಂದಿಗೂ ದಲಿತರನ್ನು ದೇಗುಲಗಳಲ್ಲಿ ಬಿಟ್ಟುಕೊಳ್ಳುವುದಿಲ್ಲ. ಕೆಲವು ರಸ್ತೆಗಳಲ್ಲಿಯೂ ಬಿಟ್ಟುಕೊಳ್ಳುವುದಿಲ್ಲ. ಮನೆಗಳ ಒಳಕ್ಕೆ ಬಿಟ್ಟುಕೊಳ್ಳುವುದಿಲ್ಲ. ಮೇಲ್ಜಾತಿಯ ಮನೆಗಳಲ್ಲಿ ದಲಿತರನ್ನು ಬಿಡಿ, ಮಧ್ಯಮ ಜಾತಿಯವರನ್ನು ನಡುಮನೆಯೊಳಕ್ಕೂ ಬಿಟ್ಟುಕೊಳ್ಳುವುದಿಲ್ಲ. ಮಧ್ಯಮ ಜಾತಿಯವರು ದಲಿತರನ್ನು ಕೊಟ್ಟಿಗೆ, ಹಿತ್ತಲಲ್ಲಿ ಕೆಲಸ ಮಾಡಿಸಿಕೊಂಡು, ಮನೆಯ ಹೊರಗೇ ಮಾತಾಡಿಸಿ ಸಾಗಹಾಕುತ್ತಾರೆ. ದಲಿತರ ಮನೆಗಳಲ್ಲಿ ಇವರು ಯಾರೂ ಊಟಮಾಡುವುದಿಲ್ಲ. ಮಡಿ-ಮೈಲಿಗೆಗಳ ನಿರ್ಬಂಧ ಜಾತಿವ್ಯವಸ್ಥೆಯ ಯಾವ ಸ್ತರವನ್ನೂ ಬಿಟ್ಟಿಲ್ಲ ನಮ್ಮ ದೇಶದಲ್ಲಿ. ಭಾರತೀಯ ಮಾನವಶಾಸ್ತ್ರ ಅಧ್ಯಯನಗಳ ಪ್ರಕಾರ ಬುಡಕಟ್ಟು ಜನಾಂಗಗಳು ವರ್ಣಾಶ್ರಮ ವ್ಯವಸ್ಥೆಯೊಳಗೆ ಬರುವುದಿಲ್ಲ. ಅವರು ಜಾತಿಯ ಯಾವ ಸ್ತರಕ್ಕೂ ಸೇರಿರದೇ ಹೊರಗೇ ಉಳಿದವರು. ಆದರೆ ದೇಶ ಅವರನ್ನು ಮುಖ್ಯವಾಹಿನಿಗೆ ತರುವ ಸಲುವಾಗಿ ಪರಿಶಿಷ್ಠ ವರ್ಗವೆಂದು ಗುರುತಿಸಿದಾಗಿನಿಂದಲೂ ಅವರನ್ನು ಜಾತಿವ್ಯವಸ್ಥೆಯ ಒಂದು ಸ್ತರಕ್ಕೆ ತಂದು ನಿಲ್ಲಿಸುವ ಪ್ರಯತ್ನಗಳನ್ನು ನಮ್ಮ ಹಿಂದೂ ಸಮಾಜ ಸಡಗರದಿಂದ ಮಾಡುತ್ತಲೇ ಬಂದಿದೆ. ಜಾತಿವ್ಯವಸ್ಥೆಯೊಳಕ್ಕೆ ತಂದು ಸೇರಿಸಿದಾಗಷ್ಟೇ ಅವರು ಮುಖ್ಯವಾಹಿನಿಗೆ ಬಂದಂತಾಗುತ್ತದೆ ಎನ್ನುವುದು ಆ ಸಮಾಜದ ಅಘೋಷಿತ ಸಂಕಲ್ಪ. ಈ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವ ನವರಾಜಕೀಯ ತವಕ ಈ ಹುನ್ನಾರಗಳನ್ನು ಇನ್ನಷ್ಟು ತ್ವರಿತಗೊಳಿಸುತ್ತಿದೆ.
ನಾಗರೀಕ ನೋಂದಣಿ ಕಾರ್ಯಕ್ರಮವನ್ನು ಇಡೀ ದೇಶಕ್ಕೆ ವಿಸ್ತರಿಸುವ ಮಾತುಗಳು ಕೇಳಿಬರುತ್ತಿರುವ, ಸಂವಿಧಾನವನ್ನೂ ಉಲ್ಲಂಘಿಸಿ ಒಂದು ರಾಜ್ಯವನ್ನೇ ವಿಸರ್ಜಿಸಿ, ಅಲ್ಲಿಯ ಜನರನ್ನೇ ನಿರ್ಬಂಧಿಸಿ ಇಟ್ಟಿರುವ ಈ ಕಾಲದಲ್ಲಿ, ದೇಶಕ್ಕೊಂದೇ ಸಂವಿಧಾನ, ಧ್ವಜ, ಭಾಷೆ, ಧರ್ಮ ಎನ್ನುವ ಮನಸ್ಥಿತಿಯಿರುವ ಪ್ರಭುತ್ವವೇ ಇವನು ನಮ್ಮವ, ಅವನು ನಮ್ಮವನಲ್ಲ ಎನ್ನುತ್ತಿದೆ. ಇನ್ನು ಸಮಾಜದ ಅತ್ಯಂತ ತಳಸ್ತರದಲ್ಲಿರುವ ಸಮುದಾಯವೊಂದು ಹೀಗೆ ವರ್ತಿಸಿದರೆ ಅದರಲ್ಲಿ ಆಶ್ಚರ್ಯ ಪಡುವುದೇನಿದೆ?
ಈ ಘಟನೆಯಲ್ಲಿ ನೋಡಬೇಕಾದ ಮತ್ತೊಂದು ಕುತೂಹಲಕರ ಅಂಶವೆಂದರೆ, ಸರ್ಕಾರಗಳು ಸಮುದಾಯ ಸುಧಾರಣೆಗಾಗಿ ವ್ಯಯ ಮಾಡುವ ಬದಲಿಗೆ ಅದನ್ನು ಕಾರ್ಪೋರೇಟ್ ಸಂಸ್ಥೆಗಳ ತಲೆಗೆ ಕಟ್ಟುತ್ತಿವೆ. ಆ ಸಂಸ್ಥೆಗಳು ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿಯ (Corporate Social Responsibility) ಹೆಸರಲ್ಲಿ ತಮ್ಮ ಲಾಭದ ಅತ್ಯಲ್ಪ ಹಣವನ್ನು ಖರ್ಚುಮಾಡುತ್ತವೆ. ಆದರೆ ಅವು ತಮಗೆ ನಾಳೆ ಆಗಬೇಕಿರುವ ದೊಡ್ಡಲಾಭದ ಮುಂಗಾಣ್ಕೆಯಿಲ್ಲದೇ ಖರ್ಚು ಮಾಡುತ್ತವೆಯೇ? ಭೂಮಿ, ನೈಸರ್ಗಿಕ ಸಂಪನ್ಮೂಲ, ಮಾನವ ಸಂಪತ್ತು, ಇಲ್ಲವೇ ಸಾಮುದಾಯಿಕ ಪ್ರತಿರೋಧಕ್ಕೆ ತಡೆ – ಹೀಗೆ ಯಾವುದೋ ಒಂದರ ಅನುಕೂಲವನ್ನು ಪಡೆಯುವ ಅಥವಾ ಪ್ರತಿಕೂಲತೆಯನ್ನು ನಿವಾರಿಸಿಕೊಳ್ಳುವ ಬಯಕೆಯಿಲ್ಲದಿದ್ದರೆ ಕಾಡುಗೊಲ್ಲರಹಟ್ಟಿಯ ಸುಧಾರಣೆಗೆ ಏಕೆ ಕೈಹಾಕುತ್ತವೆ ಎನ್ನುವುದನ್ನು ನಾವು ಗ್ರಹಿಸಬೇಕಾಗುತ್ತದೆ. ಸಮುದಾಯ ಜವಾಬ್ದಾರಿಯ ನೆಪವೊಡ್ಡಿ ತನ್ನ ದೀರ್ಘಕಾಲೀನ ಲಾಭವನ್ನು ಬಯಸುವ CSR, ಸುಧಾರಣೆಯ ನೆಪವೊಡ್ಡಿ ಕಾರ್ಪೋರೇಟುಗಳಿಗೆ ಲಾಭಮಾಡಿಕೊಡಲು ಯತ್ನಿಸುವ ಜನಪ್ರತಿನಿಧಿ, ಪಾವಿತ್ರ್ಯದ ನೆಪವೊಡ್ಡಿ ಜನಪ್ರತಿನಿಧಿಯೊಬ್ಬರು ತಮ್ಮ ಹಟ್ಟಿಯೊಳಕ್ಕೆ ಬರದಂತೆ ತಡೆದು ಆ ಮೂಲಕ ತಮ್ಮ ಮೇಲುಸ್ತರವನ್ನು ದಾಖಲಿಸ ಬಯಸುವ ಒಂದು ಜನಸಮುದಾಯ, ಹೀಗೆ ತಳಕು ಹಾಕಿಕೊಂಡಿರುವ ಇವೆಲ್ಲ ನಾವು ಇಂದು ಬದುಕುತ್ತಿರುವ ದೇಶಕಾಲದ ದೊಡ್ಡ ಪ್ರತಿಮೆಯಾಗಿ ಕಾಣುತ್ತದೆ. ನೈತಿಕ ಅದಃಪತನದ ತ್ರಿಕೋನದಲ್ಲಿ ಸಿಲುಕಿರುವ ದೇಶವನ್ನು ಸೂಚಿಸುತ್ತದೆ. ನಾವು ಒಂದು ದೇಶವಾಗಿ ಎಂತಹ ಎರಡು ತಲೆ ಬದುಕನ್ನು ಬದುಕುತ್ತಿದ್ದೇವೆ ಎನ್ನುವುದನ್ನು ಸಾರಿ ಹೇಳುತ್ತದೆ. ನಮ್ಮ ಪ್ರಗತಿಪರ ಸಮಾಜ ಈ ಸಂಕೀರ್ಣ ಆಯಾಮಗಳನ್ನು ಕಾಣದ ಹೊರತು, ಅವುಗಳ ಸಮಗ್ರ ಸುಧಾರಣೆಯ ಚರ್ಚೆಯನ್ನು ಮುನ್ನೆಲೆಗೆ ತರದ ಹೊರತು, ಗೊಲ್ಲರಹಟ್ಟಿಯ ಘಟನೆಯೊಂದನ್ನೇ ಪ್ರತ್ಯೇಕಿಸಿ ನೋಡಿ, ಅದನ್ನು ಖಂಡಿಸುವ ಅಥವಾ ಸಮರ್ಥಿಸುವ ಕೆಲಸಕ್ಕೆ ಇಳಿಯಲಾಗುವುದಿಲ್ಲ.
ತೀವ್ರ ಆರ್ಥಿಕ ಹಿಂಜರಿತದಲ್ಲಿ ದೇಶ ಕಾಣತೊಡಗಿದ್ದ ಆರ್ಥಿಕ ಪ್ರಗತಿ ಕರಗಿಯೇ ಹೋಗುತ್ತಿರುವ ಕಾಲದಲ್ಲಿ, ದೇಶದ ಬಹುತ್ವಕ್ಕೇ ಆತಂಕ ಆವರಿಸುತ್ತಿದೆ. ಬರ, ನೆರೆಗಳಿಂದ ತತ್ತರಿಸಿಹೋಗಿರುವ ಜನರ ಸಹಾಯಕ್ಕೆ ಸರ್ಕಾರಗಳು ನಿಲ್ಲುತ್ತಿಲ್ಲದ ಕಾಲದಲ್ಲಿ, ಎಲ್ಲ ಚಟುವಟಿಕೆಗಳಲ್ಲೂ ರಾಜಕೀಯ ಲಾಭವನ್ನೇ ಎದುರುನೋಡುವ ಜನಪ್ರತಿನಿಧಿಗಳಿಂದ ದೇಶ ತುಂಬಿಹೋಗಿದೆ. ಎಲ್ಲ ನೈಸರ್ಗಿಕ ಸಂಪತ್ತೂ, ಕೌಶಲ್ಯವೂ ಕರಗಿಹೋಗುತ್ತಿರುವ ಕಾಲದಲ್ಲಿ, ಅರ್ಥವ್ಯವಸ್ಥೆ ಬಂಡವಾಳಶಾಹಿಯನ್ನು ಉತ್ತೇಜಿಸುತ್ತಾ, ಬಡವನನ್ನು ದೂರವೇ ಇಡುತ್ತಿವೆ. ದೇಶದ ಸಾರ್ವಭೌಮತ್ವವನ್ನೇ ಜಾಗತೀಕರಣಕ್ಕೆ ಒತ್ತೆಯಿಡುತ್ತಿರುವ ಕಾಲದಲ್ಲಿ, ನಿಜ ಸಮಸ್ಯೆಗಳಿಂದ ಜನರನ್ನು ಬೇರೆಯೇ ಅಕಲ್ಪಿತ ಚರ್ಚೆಗೆ ಎಳೆದೊಯ್ಯುತ್ತಿರುವ ಸ್ಪಿನ್ ಡ್ರೈವರುಗಳು ಉಛ್ರಾಯ ಮೆರವಣಿಗೆಯಲ್ಲಿದ್ದಾರೆ. ಇಂತಹ ವಿಷಮ ದ್ವಂದ್ವಗಳ ನಡುವೆಯೇ ನಮ್ಮದು ಹಿಂದೂರಾಷ್ಟ್ರವಾಗಬೇಕೆಂಬ ಹಂಬಲದಿಂದ ಹೊರಟಿರುವ ಈ ದೇಶದ ಜನ ಈ ಘಟನೆಯ ಬಗ್ಗೆ ಚರ್ಚಿಸುವ ಅರ್ಹತೆ ಮತ್ತು ಯೋಗ್ಯತೆಯನ್ನು ಖಂಡಿತಾ ಕಳಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ
ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.
ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ
ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.
ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ
ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.
ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ
ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.
ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ
ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.
ಭವಿಷ್ಯದ ಆಶಯ
ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



