ಅಂತರಂಗ
ಕಾಮರೂಪದ ಪ್ರಭಾಕರ
- ಪ್ರೊ.ರಹಮತ್ ತರೀಕೆರೆ
ನಾನು ಕೋಲಾರಕ್ಕೆ ಹೋದಾಗೆಲ್ಲ ಎರಡು ಜಾಗಗಳಿಗೆ ತಪ್ಪದೆ ಭೇಟಿ ಕೊಡುತ್ತೇನೆ. ಒಂದು-ಕೆ.ರಾಮಯ್ಯ ಮತ್ತವರ ಸಂಗಾತಿಗಳು ಸೇರಿ ತೇರುಹಳ್ಳಿ ಬೆಟ್ಟದ ಮೇಲೆ ಕಟ್ಟಿರುವ `ಆದಿಮ’ಕ್ಕೆ; ಇನ್ನೊಂದು-`ಕಾಮರೂಪಿ’ ಎಂಬ ಹೆಸರಲ್ಲಿ ಬರೆಯುತ್ತಿದ್ದ ಕನ್ನಡ ಲೇಖಕ ಡಾ. ಎಂ.ಎಸ್. ಪ್ರಭಾಕರ ಅವರಿರುವ ಕಠಾರಿಪಾಳ್ಯದ ಮನೆಗೆ. 50ರ ದಶಕದ ಕೊನೆಯಲ್ಲಿ ಕರ್ನಾಟಕ ಬಿಟ್ಟುಹೋದ ಪ್ರಭಾಕರ, ‘ಹಿಂದೂ’ ಪತ್ರಿಕೆಯ ವರದಿಗಾರರಾಗಿ ಆಫ್ರಿಕಾ ಅಮೇರಿಕ ಬಾಂಗ್ಲಾದೇಶ ಈಶಾನ್ಯ ಭಾರತವನ್ನೆಲ್ಲ ಅಲೆದಾಡಿ, ಕಡೆಗೆ ಕಾಮರೂಪದಲ್ಲಿ (ಅಸ್ಸಾಮಿನ ಪುರಾತನ ಹೆಸರಿದು) ನೆಲೆಸಿಬಿಟ್ಟರು.
`ಕಾಮರೂಪ’ ಶಬ್ದಕ್ಕೆ ಬಯಸಿದ ರೂಪಧಾರಣೆ ಮಾಡುವ ಮಾಯಾವಿ ವಿದ್ಯೆ ಎಂಬರ್ಥವೂ ಇದೆ. ಎಂಬತ್ತರ ಪ್ರಾಯದಲ್ಲಿ ಕರ್ನಾಟಕಕ್ಕೆ ಮರಳಿ ಬಂದಿರುವ ಪ್ರಭಾಕರ ಅವರು, ತಾವು ಹುಟ್ಟಿಬೆಳೆದ ಮನೆಯಲ್ಲಿ ಬಿಡಾರ ಹೂಡಿದ್ದಾರೆ. ಹಿರೀಕರು ಕಟ್ಟಿದ ದೊಡ್ಡಮನೆ. ಮನೆಯೊಳಗೊಂದೇ ಜೀವ; ಮನೆ ತುಂಬ ಪುಸ್ತಕದ ರಾಶಿ (ಹೆಚ್ಚಿನವು ಇಂಗ್ಲೀಶ್ ಬಂಗಾಳಿ ಅಸ್ಸಾಮಿ). ನಟ್ಟನಡುವಿರುವ ಹಾಲಿನ ಮೂಲೆಯಲ್ಲಿ ಬೀದಿಗೆ ಬೆನ್ನುಕೊಟ್ಟಂತೆ ಕೂತು, ಲ್ಯಾಪ್ಟಾಪಿನಲ್ಲಿ ಬರೆಯುತ್ತ, ವೆಬ್ಸೈಟುಗಳನ್ನು ಜಾಲಾಡುತ್ತ, ಬ್ಲಾಗುಗಳನ್ನೋದುತ್ತ ಪ್ರಭಾಕರ ಕುಳಿತಿರುತ್ತಾರೆ.
ಅವರ ಮನಗೆ ಹೋದಾಗಲೆಲ್ಲ ನನಗೆ ರಾಗಿಮುದ್ದೆ ಸೊಪ್ಪಿನ ಸಾರಿನ ಊಟ ಸಿಗುತ್ತದೆ. ಅವರು ಉಣ್ಣುವುದೊಂದು ಅಪೂರ್ವ ದೃಶ್ಯ. ತಣಿಗೆಯ ನಡುವೆ ಹದವಾಗಿ ಬೆಂದು ಕಂಪು ಬೀರುವ ಗೋಂದಿನಂತಹ ಕೆಂಗಪ್ಪು ಬಣ್ಣದ ಬಿಸಿಮುದ್ದೆಯನ್ನಿಟ್ಟು, ಅದರ ತಲೆಯ ಮೇಲೆ ಶಿಖರವನ್ನು ಹಿಮವು ಅಲಂಕರಿಸುವಂತೆ ಬೆಣ್ಣೆಯ ಚೂರನ್ನಿಡುತ್ತಾರೆ; ಬೆಣ್ಣೆಯು ಮುದ್ದೆ ಕಾವಿಗೆ ಕರಗಿ ಇಡೀ ಚೆಂಡನ್ನು ಆವರಿಸಿ ಅಭಿಷೇಕ ಮಾಡಿಸಿಕೊಂಡ ಮೂರುತಿಯಂತೆ ಥಳಥಳ ಹೊಳೆಯುತ್ತದೆ. ಆಗ ಘಮಿಸುವ ಮುದ್ದೆಯನ್ನು ಚೆನ್ನಾಗಿ ಮಿದ್ದು, ಒಂದು ಬದಿಯಿಂದ ಇಷ್ಟಿಷ್ಟೇ ಮುರಿದು ತುತ್ತು ಮಾಡಿ, ಸೊಪ್ಪಿನ ಗಟ್ಟಿಸಾರಲ್ಲಿ ಹೊರಳಾಡಿಸಿ ಗುಕ್ಕನೆ ನುಂಗಿ ಕಣ್ಮುಚ್ಚಿ ಕೊಳ್ಳುತ್ತಾರೆ. ತರುವಾಯ ಶ್ರೀಯುತರು ಜ್ಞಾನೋದಯವಾದ ಸಿದ್ಧನಂತೆ ಅವರ ಮುಖದಲ್ಲಿ ಪರಮಾನಂದದ ಒಂದು ಕಳೆ ಆವಿರ್ಭವಿಸುತ್ತದೆ. ಇದನ್ನೆಲ್ಲ ಕಾಣುವಾಗ, ಲೋಕವನ್ನೆಲ್ಲ ಸುತ್ತಾಡಿರುವ ಇವರು ಕೋಲಾರಕ್ಕೆ ಮುದ್ದೆಸುಖಕ್ಕಾಗಿಯೆ ಬಂದರೇನೊ ಎಂದು ಶಂಕೆ ಬರುತ್ತದೆ. ಪ್ರಭಾಕರ ಅವರಿಗೆ ಆಧುನಿಕ ಕನ್ನಡ ಸಾಹಿತ್ಯದ ಮೇಲೆ ಅನೇಕ ದೂರುಗಳಿವೆ. ಅವುಗಳಲ್ಲಿ ಆಹಾರ ತಯಾರಿಕೆ ಮತ್ತು ಸೇವನೆ ಕುರಿತು ಅದರಲ್ಲಿ ವಿವರಗಳೇ ಇಲ್ಲ ಎಂಬುದೂ ಒಂದು.
ಕನ್ನಡದ ಅತಿಹಿರಿಯ ಮತ್ತು ಹೆಚ್ಚು ಬರೆಯದ ಲೇಖಕರಲ್ಲಿ ಪ್ರಭಾಕರ ಅವರೂ ಒಬ್ಬರು. ನಾನು ಅವರ ‘ಕುದುರೆಮೊಟ್ಟೆ’ ಕಾದಂಬರಿಯನ್ನೂ ‘ಒಂದು ತೊಲ ಪುನುಗು ಮತ್ತು ಇತರ ಕತೆಗಳು’ ಸಂಕಲನವನ್ನೂ ಓದಿದ್ದೆ. ಇವುಗಳಲ್ಲಿ ‘ಕುದುರೆ ಮೊಟ್ಟೆ’ ಈಗಲೂ ಪ್ರಿಯವಾದ ಪುಸ್ತಕ. ಅದರಲ್ಲಿರುವ ಕೆಲವು ಪಾತ್ರಗಳು ಕೊಂಚ ವಿಕ್ಷಿಪ್ತವಾಗಿವೆ; ಅಲ್ಲಿನ ಬಾಳಿನ ಸನ್ನಿವೇಶಗಳೂ ಅನಿರೀಕ್ಷಿತವಾಗಿವೆ. ಆದರೆ ಎಲ್ಲಿಯೂ ಹುಸಿ ಅನಿಸದಂತೆ, ಒಂದೇ ಶಬ್ದ ಅಪವ್ಯಯವಾಗದಂತೆ ಅದನ್ನು ಬರೆಯಲಾಗಿದೆ. ಪಾತ್ರಗಳನ್ನು ತಮ್ಮ ಸಿದ್ಧಾಂತಕ್ಕೆ ತಕ್ಕಂತೆ ಮಣಿಸಿ ಕೈಗೊಂಬೆಯಂತೆ ಆಡಿಸುತ್ತ, ಕೆಲವನ್ನು ಮುದ್ದಾಮಾಗಿ ದುರುಳಗೊಳಿಸಿ ಕಲೆಯ ಜಾಣಮುಸುಕಿನಲ್ಲಿ ಅಡಗಿಸುತ್ತ, ಕೆಲವು ಕಾದಂಬರಿಗಳು ಕನ್ನಡದಲ್ಲಿ ಪ್ರಕಟವಾಗುತ್ತಿವೆ. ಇಂತಹ ಹೊತ್ತಲ್ಲಿ ಅರ್ಧ ಶತಮಾನದ ಹಿಂದೆ ಪ್ರಕಟವಾದ ಈ ಕಾದಂಬರಿ, ಬಾಳನ್ನು ಕುರಿತು ತೋರುವ ಕಕ್ಕುಲಾತಿ ಕಂಡು ಖುಶಿಯಾಗುತ್ತದೆ. ಕತೆಗಾರರಿಗೆ ತಾವು ಸೃಷ್ಟಿಸುವ ಕೆಲವು ಪಾತ್ರಗಳ ಮೇಲೆ ಕೊಂಚ ಭಾವ ಪಕ್ಷಪಾತವಿರುತ್ತದೆ. ಆದರೆ ತಾವು ಸೃಜಿಸುವ ಎಲ್ಲ ಪಾತ್ರಗಳನ್ನು ತಾಯಿಯಂತೆ ನೋಡುವುದು ಬರೆಹದ ನೈತಿಕತೆ. ಈ ಸಂಗತಿ ಕುವೆಂಪು ಮತ್ತು ಟಾಲ್ ಸ್ಟಾಯ್ ಕಾದಂಬರಿ ಓದಿದವರಿಗೆ ಗೊತ್ತಿದೆ.
ಕಾಮವನ್ನು ಇಟ್ಟುಕೊಂಡು ಜೀವನದ ಸತ್ಯಗಳನ್ನು ಶೋಧಿಸುವ ವಿಷಯದಲ್ಲಿ ಕಾಮರೂಪಿಯವರು, ಒಬ್ಬ ಟಿಪಿಕಲ್ ನವ್ಯಲೇಖಕರೇ. ಆದರೆ ನವ್ಯದ ಕೆಲವು ಲೇಖಕರಲ್ಲಿ ಕಾಣುವಂತೆ, ಅದಕ್ಕವರು ಅನಗತ್ಯ ಪ್ರಾಮುಖ್ಯ ಕೊಡುವುದಿಲ್ಲ. ಅದನ್ನು ಚಪ್ಪರಿಸುವುದಿಲ್ಲ. ವೈಭವೀಕರಿಸುವುದಿಲ್ಲ. ಬದಲಿಗೆ, ಮನುಷ್ಯರಾದವರು ಜೀವನದ ಇಕ್ಕಟ್ಟುಗಳಲ್ಲಿ ಸಿಲುಕಿ ಅನಿವಾರ್ಯವಾಗಿ ವರ್ತಿಸುವ ಪರಿಯನ್ನು ತಣ್ಣಗೆ ವ್ಯಂಗ್ಯವಾಗಿ ಚಿತ್ರಿಸುತ್ತಾ ಹೋಗುತ್ತಾರೆ. ಸತ್ಯಕ್ಕಿರುವ ಹಲವು ಮುಖಗಳನ್ನು ಹಿಡಿಯುವಂತಹ ಕುರುಸೋವಾನ ‘ರಶೋಮನ್’ ಸಿನಿಮಾ ನೆನಪಿಸುವ ಈ ಕಾದಂಬರಿ, ಮತ್ತೆಮತ್ತೆ ಓದಬೇಕು ಎನಿಸುವಷ್ಟು ತಾಜಾ ಆಗಿದೆ. ‘ಉಪಪತ್ತಿಯೋಗ’ ಎಂಬುದನ್ನು ಬಿಟ್ಟರೆ, ಉಳಿದಂತೆ ವ್ಯಕ್ತಿವಾದವನ್ನು ಅತಿಯಾಗಿ ಬಿಂಬಿಸುವ ತಂತ್ರದ ಬಿಗಿತದಲ್ಲಿರುವ ಅವರ ಕತೆಗಳು ಅಷ್ಟು ಆಪ್ತವೆನಿಸಿಲ್ಲ.
ನನಗೆ ಪ್ರಭಾಕರ್ ಕುರಿತು ಆಸಕ್ತಿ ಮೂಡಿಸಿದವರು ಮಾರ್ಕ್ಸ್ವಾದಿ ಚಿಂತಕ ಕೆ.ರಾಘವೇಂದ್ರರಾವ್ ಅವರು. ಅಮೆರಿಕೆಯ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುತ್ತಿದ್ದ ಎ.ಕೆ.ರಾಮಾನುಜನರ ಹೊಂದಾಣಿಕೆಯ ಗುಣವನ್ನು ಕಟುವಾಗಿ ವಿಮರ್ಶಿಸುತ್ತ, ಅಲ್ಲಿನ ಶೈಕ್ಷಣಿಕ ಕ್ಷೇತ್ರದಲ್ಲಿರುವ ಬಿಳಿಯರ ಯಜಮಾನಿಕೆಗೆ ಬಾಗದೆ ಹೊರಬಂದ ಪ್ರಭಾಕರ ಅವರ ದಿಟ್ಟ ಸ್ವಭಾವವನ್ನು ಅವರು ತಮ್ಮ ಸಂದರ್ಶನದಲ್ಲಿ ಪ್ರಸ್ತಾಪಿಸಿದ್ದರು. ಪ್ರಭಾಕರ ಅವರನ್ನು ಭೇಟಿಯಾಗಬೇಕು ಎಂದು ಅನಿಸುತ್ತಿತ್ತು. ಅದರಲ್ಲೂ ಭಾರತದ ಶಾಕ್ತಪೀಠಗಳಲ್ಲಿ ಮುಖ್ಯವಾಗಿರುವ ಅಸ್ಸಾಮಿನ ಕಾಮಾಖ್ಯಕ್ಕೆ ಹೋಗಲು ಯತ್ನಿಸುತ್ತಿದ್ದ ನಾನು, ಅಲ್ಲೇ ಸಮೀಪದ ಗೌಹಾತಿಯಲ್ಲಿರುವ ಅವರನ್ನು ಕಾಣಲು ಹವಣಿಕೆ ಮಾಡಿಕೊಂಡಿದ್ದೆ. ಆದರೆ ಸಾರ್ವಜನಿಕ ವ್ಯಕ್ತಿಯಾಗಲು ನಿರಾಕರಿಸಿ ಅಜ್ಞಾತವಾಗಿಯೇ ಬಾಳುವ ಅವರು ಸುಲಭವಾಗಿ ಸಿಗುತ್ತಿರಲಿಲ್ಲ.
ನನ್ನ ತವಕವನ್ನರಿತಿದ್ದ ಕೆ.ರಾಮಯ್ಯ, ‘ಪ್ರಭಾಕರ್ ಕರ್ನಾಟಕಕ್ಕೆ ಬಂದಿದ್ದಾರೆ. ಬನ್ನಿ’ ಎಂದು ಅವರ ಮನೆಗೆ ಕರೆದುಕೊಂಡು ಹೋದರು. ಮಧ್ಯಾಹ್ನದ ಸುಡುಹೊತ್ತು. ಪ್ರಭಾಕರ ಪ್ರೀತಿಯಿಂದ ಬರಮಾಡಿಕೊಂಡು ನೊರೆ ತುಂಬಿದ ಒಗರು ಬೀರಿನ ಮಗ್ಗನ್ನು ಕೈಗೆ ಕೊಟ್ಟು, ಕಾಮಾಖ್ಯದ ಬಗ್ಗೆಯೂ ತಂತ್ರ ಪಂಥದ ಬಗ್ಗೆಯೂ ಇರುವ ಕೃತಿಗಳನ್ನು ತೋರಿಸುತ್ತ, ಗಂಟೆಗಟ್ಟಳೆ ಮಾತಾಡಿದರು. ಅರಿವಿನ ಕಿಡಿಗಳು ಹಾರುವ ಅದೊಂದು ವಿದ್ವತ್ಪೂರ್ಣ ಹರಟೆ.
ನಾನು ಅವರಲ್ಲಿ ಶಿಷ್ಯವೃತ್ತಿ ಸ್ವೀಕರಿಸಿ ಹಲವಾರು ಸಲ ಕೋಲಾರಕ್ಕೆ ಹೋಗಿ ಬಂದಿದ್ದೇನೆ. ಅವರ ಮಾತುಕತೆಗಳಲ್ಲಿ ನನಗೆ ಮುಖ್ಯವಾಗಿ ಕಂಡಿದ್ದು, ಜಾತ್ಯತೀತವಾದ ಮನಸ್ಸು; ಸಣ್ಣಪುಟ್ಟ ಸಂಗತಿಗಳ ಮೇಲೂ ಕಾಳಜಿಯಿಂದ ಸೂಕ್ಷ್ಮವಾಗಿ ಚಿಂತಿಸುವ ಮಾನವೀಯತೆ; ಗತಕಾಲದ ಬಗ್ಗೆ ಹಳಹಳಿಕೆಯಿಲ್ಲದೆ ವರ್ತಮಾನದ ಸಮಸ್ಯೆಗಳನ್ನು ಕುರಿತು ಚಿಂತಿಸುವ ಪ್ರಖರವೂ ನಿಷ್ಠುರವೂ ಆದ ರಾಜಕೀಯ ಪ್ರಜ್ಞೆ. ಸಾರ್ವಜನಿಕ ಬದುಕಿನಲ್ಲಿ ಜಾತಿಪದ್ಧತಿ ಎಲ್ಲೆಮೀರಿ ನಿರತವಾಗಿರುವ ಕುರಿತ ಹೇವರಿಕೆ. ಹಿರಿಯ ಲೇಖಕರಲ್ಲಿ ಸಾಮಾನ್ಯವಾಗಿ ಎರಡು ಸ್ವಭಾವಗಳಿರುತ್ತವೆ. ಒಂದು- ಕಳೆದುಹೋದ ಕಾಲದ ಬಗ್ಗೆ ಭಾವುಕ ಮರುಕಳಿಕೆ. ಎರಡು-ವರ್ತಮಾನದ ಸಾಮಾಜಿಕ ರಾಜಕೀಯ ವೈರುಧ್ಯಗಳನ್ನು ಉದಾರವಾಗಿ ನೋಡುತ್ತ, ಚಿಂತನೆಯ ಮೊನಚನ್ನು ಕಳೆದುಕೊಳ್ಳುವುದು. ಆದರೆ ಆತ್ಮಕ್ಕೆ ಸದಾ ಬೆಂಕಿ ಹತ್ತಿಸಿಕೊಂಡಂತೆ ಉರಿಯುವ ಕೆಲವರಿದ್ದಾರೆ. ಕೋಚೆ, ಕುಸುಮಾಕರ ದೇವರಗೆಣ್ಣೂರ, ಎಂ.ಡಿ. ನಂಜುಂಡಸ್ವಾಮಿ, ನೀಲಗಂಗಯ್ಯ ಪೂಜಾರ, ಕೆ.ರಾಘವೇಂದ್ರರಾವ್, ಅಬ್ಬಿಗೇರಿ ವಿರೂಪಾಕ್ಷಪ್ಪ, ಸಾರಾ ಅಬೂಬಕರ್, ಕಾಮರೂಪಿ ಪ್ರಭಾಕರ-ಇವರೆಲ್ಲ ಇಂತಹವರು. ಈ ಹಿರಿಯರ ಜತೆ ಮಾತಾಡುವಾಗ ಇವರ ಹಠಮಾರಿತನ, ಜಗಳಗಂಟಿತನ, ಆದರ್ಶವಾದ, ನೈತಿಕ ಪ್ರಜ್ಞೆ ಹಾಗೂ ಭಿನ್ನಮತ ಇಷ್ಟವಾಗುತ್ತದೆ.
ಕರ್ನಾಟಕದಿಂದ ಬಹುಕಾಲ ದೂರವಿದ್ದ ಕಾರಣದಿಂದ ಏರ್ಪಟ್ಟಿರುವ ಅಪರಿಚಿತತೆಯಿಂದಲೊ ಅಥವಾ ಕರ್ನಾಟಕದ ಒಳಗೇ ಇದ್ದೂಇದ್ದೂ ನಮಗೆ ಕಾಣದಂತಾಗಿರುವ ವೈರುಧ್ಯಗಳು ‘ಹೊರಗಿನಿಂದ’ ಬಂದಿರುವ ಅವರಿಗೆ ಒಡೆದು ಕಾಣುತ್ತಿರುವುದರಿಂದಲೊ, ಪ್ರಭಾಕರ ಕರ್ನಾಟಕದ ಸಮಕಾಲೀನ ಸಾಂಸ್ಕೃತಿಕ ರಾಜಕಾರಣದ ವೈರುಧ್ಯಗಳ ಬಗ್ಗೆ ತೀಕ್ಷ್ಣವಾದ ಟಿಪ್ಪಣಿ ಮಾಡುತ್ತಿರುತ್ತಾರೆ; ಕನ್ನಡಿಗರ ಸ್ವಭಾವದಲ್ಲೇ ವ್ಯಕ್ತಿನಿಷ್ಠೆಗಾಗಿ ವಿಮರ್ಶೆಯ ನಿಷ್ಠುರತೆ ಬಿಟ್ಟುಕೊಡುವ, ಸಜ್ಜನಿಕೆಯ ಭಾಷೆಯಲ್ಲಿ ವಾಸ್ತವವನ್ನು ಅಡಗಿಸುವ ಪ್ರವೃತ್ತಿಯಿದೆ ಎಂದು ಹೇಳುತ್ತಿರುತ್ತಾರೆ. ಸಂಘಟಕರೊಬ್ಬರು ಕಾರ್ಯಕ್ರಮವೊಂದಕ್ಕೆ ಕರೆಸಿಕೊಂಡು ಪರಿಚಯ ಭಾಷಣದಲ್ಲಿ ತಮ್ಮನ್ನು ಅತಿಯಾಗಿ ಹೊಗಳಿದ್ದನ್ನು ನೆನೆಯುತ್ತ ಅವರೊಮ್ಮೆ ಹೇಳಿದರು: “ಏನ್ ಸ್ವಾಮಿ ಕನ್ನಡಿಗರು? ಎಷ್ಟು ಉದಾರತೆ! ನನ್ನ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ. ನಾನು ಎಲ್ಲ ಸೇರಿದರೆ ನೂರೈವತ್ತು ಪುಟಗಳನ್ನೂ ಬರೆದಿಲ್ಲ. ಕನ್ನಡಕ್ಕೆ ದೊಡ್ಡ ಕೊಡುಗೆಯನ್ನು ಕೊಟ್ಟಿಲ್ಲ. ಆದರೂ ವಾಚಾಮಗೋಚರ ಹೊಗಳಿಬಿಟ್ಟರು. ಕರ್ನಾಟಕದಲ್ಲಿ ಮಾತಿಗೆ ಬೆಲೆಯೇ ಇದ್ದಂತಿಲ್ಲ.’’
ಇದನ್ನು ಕೇಳುವಾಗ ಈಚೆಗೆ ಕಲ್ಕತ್ತಾದಲ್ಲಿ ನಾನು ಕಂಡ, ಹಿರಿಯ ಲೇಖಕ ರುದ್ರಪ್ರತಾಪ ಸೇನರ ಸನ್ಮಾನ ಕಾರ್ಯಕ್ರಮ ನೆನಪಾಯಿತು. ಸೇನರಿಗೆ 75ವರ್ಷ ತುಂಬಿದ ನೆಪದಲ್ಲಿ ಇರಿಸಿಕೊಂಡಿದ್ದ ಆ ಕಾರ್ಯಕ್ರಮ ಎಷ್ಟು ವಿಮರ್ಶಾತ್ಮಕವಾಗಿತ್ತು ಎಂದರೆ, ಅವರ ಶಿಷ್ಯರು ತಮ್ಮ ಗುರುವಿನ ಜತೆ ಕೋರ್ಟ್ಮಾರ್ಶಲ್ ನಡೆಸುವವರ ಹಾಗೆ ಪ್ರಶ್ನೆ ಕೇಳುತ್ತಿದ್ದರು. ಸೇನರು ಆ ಕಟುತರ ಪ್ರಶ್ನೆಗಳಿಗೆಲ್ಲ ಪ್ರಾಮಾಣಿಕವಾಗಿ ದ್ವಂದ್ವವಿಲ್ಲದೆ ಉತ್ತರಿಸುತ್ತಿದ್ದರು. ಹಿರಿಯರ ತಲೆಗೆ ಅಭಿನಂದನ ಗ್ರಂಥಗಳ ಸರಮಾಲೆಯನ್ನು ತಂದು ಕಟ್ಟಿ, ಎಗ್ಗಿಲದೆ ಹೊಗಳಿ ವೈಭವೀಕರಿಸುವ ಪದ್ಧತಿಯಿರುವ ಕರ್ನಾಟಕದಲ್ಲಿ, ಈ ಪರಿಯ ನಿಷ್ಠುರತೆ ಕಲ್ಪಿಸಿಕೊಳ್ಳುವುದೇ ಕಷ್ಟ.
ತೋರುಗಾಣಿಕೆಯನ್ನು ಸದಾ ನಿರಾಕರಿಸುವ ಪ್ರಭಾಕರ ಅವರಲ್ಲಿ, ಅವರ ಖಂಡಿತವಾದಿ ನಿಲುವಿಗೆ ಅಷ್ಟೊಂದು ತಾಳೆಯಾಗದ ಇನ್ನೊಂದು ಮುಖವಿದೆ. ಅದೆಂದರೆ, ಜೀವನಪ್ರೀತಿಯ ಸಂಕೇತದಂತಿರುವ ತಮಾಶೆ ಮತ್ತು ಪೋಲಿತನ. ಈ ತಮಾಶೆಯ ಗುಣ ಅದ್ಭುತ ನಾಟಕೀಯ ಶೈಲಿಯಾಗಿ ಅವರ ಕಥೆ ಕಾದಂಬರಿಗಳಲ್ಲೆಲ್ಲ ಆವರಿಸಿಕೊಂಡಿದೆ. ತಮಗೆ ಪಾಠ ಹೇಳಿದ ಗುರುಗಳ ವೈಯಕ್ತಿಕ ಬದುಕಿನಲ್ಲಿದ್ದ ಸನಾತನವಾದ ಮತ್ತು ತರಗತಿಗಳಲ್ಲಿ ಕನ್ನಡ ಬಳಸದ ಅವರ ಇಂಗ್ಲಿಷಿನ ವ್ಯಾಮೋಹ ಕುರಿತಂತೆ, ಅವರಲ್ಲಿ ಸ್ವಾರಸ್ಯಕರ ಮಾಹಿತಿಗಳಿವೆ. ಪ್ರಭಾಕರ ಅವರು ಆಪ್ತರ ಎದುರು ತಾವು ಬರೆದಿರುವ ಅಪ್ರಕಟಿತ ಪೋಲಿ ಪದ್ಯಗಳನ್ನು ವಾಚಿಸುವುದುಂಟು. ಬಹುಶಃ ಇದು ಅವರ ಗೆಳೆಯರಾಗಿದ್ದ ಎಚ್.ಎಸ್. ಬಿಳಿಗಿರಿಯವರ ಸಹವಾಸ ಫಲವಿರಬೇಕು.
ಒಂದೇ ವ್ಯಕ್ತಿತ್ವದಲ್ಲಿ ಒಟ್ಟಿಗೇ ಇರಲು ಕಷ್ಟವೆನಿಸಬಹುದಾದ ಇನ್ನೂ ಅನೇಕ ಸಂಗತಿಗಳು ಅವರಲ್ಲಿ ಸಹಜವಾಗಿ ನಿರಾಳವಾಗಿ ಇವೆ. ಉದಾ.ಗೆ, ಬಹುಭಾಷಿಕರಾದ ಅವರ ಮನೆಮಾತು ತಮಿಳುಗನ್ನಡ; ಬರವಣಿಗೆ ಕನ್ನಡ ಮತ್ತು ಇಂಗ್ಲೀಶಿನಲ್ಲಿ; ಸಂಸ್ಕೃತ ಅಸ್ಸಾಮಿ ಬಂಗಾಳಿ ಭಾಷೆಗಳಲ್ಲಿ ದೊಡ್ಡ ವಿದ್ವತ್ತು. (ಅವರ ಅಸ್ಸಾಮಿ ಬಂಗಾಳಿ ತಿಳಿವಳಿಕೆಯಿಂದ ಕನ್ನಡಕ್ಕೆ ಪ್ರಯೋಜನವಿನ್ನೂ ಆಗಿಲ್ಲ). ಪಂಪ ಅವರ ಇಷ್ಟದ ಕವಿ. ಮೂಲತಃ ಇಂಗ್ಲೀಶ್ ಸಾಹಿತ್ಯದ ವಿದ್ಯಾರ್ಥಿಯಾದರೂ ಸಾಹಿತ್ಯಕ್ಕಿಂತ ಹೆಚ್ಚಾಗಿ ಅಂತರಾಷ್ಟ್ರೀಯ ರಾಷ್ಟ್ರೀಯ ರಾಜಕಾರಣದ ಮೇಲೆ ಹೆಚ್ಚು ಬರೆವಣಿಗೆ. ಅದರಲ್ಲೂ ಈಶಾನ್ಯ ಭಾರತದ ರಾಜಕಾರಣ ಭಾಷೆ ಧರ್ಮ ಸಂಸ್ಕೃತಿ ಕುರಿತ ಅವರ ತಿಳಿವಳಿಕೆ ಅಪರೂಪದ್ದು. ಇವನ್ನೆಲ್ಲ ಒಟ್ಟಿಗೆ ಹೇಗೆ ಕಲ್ಪಿಸಿಕೊಳ್ಳುವುದು? ಪ್ರಭಾಕರ ತಮ್ಮ ಕಾದಂಬರಿಯ ಒಂದು ಪಾತ್ರದ ಹಾಗೇ ಬದುಕಿದ್ದಾರೆ.
ಅವರು ಈಚೆಗೆ ಮಾತಾಡುತ್ತ ಕೊಂಚ ದಣಿದ ದನಿಯಲ್ಲಿ “ಸ್ವಾಮಿ, ಕರ್ನಾಟಕ ನನಗೆ ಸಾಕಾಗಿದೆ. ಗೌಹಾಟಿಗೆ ಹೋಗಬೇಕು ಅನಿಸುತ್ತಿದೆ’ ಎಂದು ಗೊಣಗಿದರು. “ಹೋಗಿ. ಆದರೆ ಮತ್ತೆಬನ್ನಿ’’ ಎಂದೆ. ಅವರಲ್ಲಿ ಕೋಲಾರ-ಗೌಹಾತಿಗಳ ನಡುವೆ ವಿಚಿತ್ರವಾದ ಆಕರ್ಷಣೆ ವಿಕರ್ಷಣೆಯಿದೆ. ಇದು ಬಹುಕಾಲ ಬೇರೆಡೆ ಬೆಳೆದ ಮರ ತನ್ನ ಮೂಲನೆಲಕ್ಕೆ ಬಂದು ನಾಟಿಗೊಂಡರೆ ಬೇರೂರುವ ಕಷ್ಟ. ಮರಳಿ ಹುಟ್ಟಿದೂರಿಗೆ ಬರುವಿಕೆ ಬಾಲ್ಯದ ನೆನಪುಗಳನ್ನು ಎಚ್ಚರಿಸಿ ಸುಖ ಕೊಡುತ್ತದೆ; ಆದರೆ ಹೊಚ್ಚ ಹೊಸತೆೆನಿಸುವಷ್ಟು ಬದಲಾಗಿರುವ ಪರಿಸರವು, ಕಾಡುವ ಏಕಾಂಗಿತನವನ್ನೂ ತಂದಿಡುತ್ತದೆ. ಯಾರ ಮರುಕವನ್ನೂ ಬಯಸದೆ ಏಕಾಂತದಲ್ಲಿ ಘನತೆಯಿಂದ ಕೊನೆಯ ದಿನಗಳನ್ನು ಕಳೆಯ ಬಯಸುವ ಇಂತಹ ಹಠಮಾರಿ ಜೀವಗಳು, ಒಳಗೇ ಮೃದ್ವಂಗಿಗಳಾಗಿ ಆಪ್ತಸಂಗಾತಕ್ಕೆ ಹಾತೊರೆಯುತ್ತಿರುತ್ತವೆ.
ಆ ಸಂಗಾತದ ಸ್ವರೂಪ ಎಂತಹುದು ಎಂದು ಸ್ಪಷ್ಟವಾಗುವುದಿಲ್ಲ. ನಾನು ‘ಕಾಮರೂಪಕ್ಕೆ ಯಾವಾಗ ಹೋಗುತ್ತೀರಿ’ ಎಂದು ಕೇಳಿದೆ: ‘ಆದಿಮದ 50ನೇ ಬೆಳುದಿಂಗಳ ಕಾರ್ಯಕ್ರಮ ಮುಗಿಸಿಕೊಂಡು’ ಎಂದರು.
ಪ್ರತಿಯೊಬ್ಬರಿಗೂ ಬಾಳಿನಲ್ಲಿ ಬಹುರೂಪಧಾರಣೆ ಮಾಡಬೇಕಾದ ಒತ್ತಡಗಳು ಎದುರಾಗಬಹುದು. ಆದರೆ ಈ ರೂಪಧಾರಣೆಗೆ ಕಾರಣ, ನಮ್ಮ ಇಚ್ಛಾನಿಚ್ಛೆಗಳು ಮಾತ್ರವಲ್ಲ, ಬಾಳಿನ ಅನೂಹ್ಯ ಒತ್ತಡಗಳು ಸಹ. ಈ ಒತ್ತಡಗಳು ಬರೆಹ ಇಲ್ಲವೇ ಮಾತಿನ ವ್ಯಾಖ್ಯಾನಕ್ಕೆ ಕೆಲವೊಮ್ಮೆ ನಿಲುಕುವಂತೆ ಇರುವುದಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243




