ಅಂತರಂಗ
ಕಾಮರೂಪದ ಪ್ರಭಾಕರ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2022/12/kamarupa_suddidina.jpg&description=ಕಾಮರೂಪದ ಪ್ರಭಾಕರ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2022/12/kamarupa_suddidina.jpg&description=ಕಾಮರೂಪದ ಪ್ರಭಾಕರ', 'pinterestShare', 'width=750,height=350'); return false;" title="Pin This Post">
- ಪ್ರೊ.ರಹಮತ್ ತರೀಕೆರೆ
ನಾನು ಕೋಲಾರಕ್ಕೆ ಹೋದಾಗೆಲ್ಲ ಎರಡು ಜಾಗಗಳಿಗೆ ತಪ್ಪದೆ ಭೇಟಿ ಕೊಡುತ್ತೇನೆ. ಒಂದು-ಕೆ.ರಾಮಯ್ಯ ಮತ್ತವರ ಸಂಗಾತಿಗಳು ಸೇರಿ ತೇರುಹಳ್ಳಿ ಬೆಟ್ಟದ ಮೇಲೆ ಕಟ್ಟಿರುವ `ಆದಿಮ’ಕ್ಕೆ; ಇನ್ನೊಂದು-`ಕಾಮರೂಪಿ’ ಎಂಬ ಹೆಸರಲ್ಲಿ ಬರೆಯುತ್ತಿದ್ದ ಕನ್ನಡ ಲೇಖಕ ಡಾ. ಎಂ.ಎಸ್. ಪ್ರಭಾಕರ ಅವರಿರುವ ಕಠಾರಿಪಾಳ್ಯದ ಮನೆಗೆ. 50ರ ದಶಕದ ಕೊನೆಯಲ್ಲಿ ಕರ್ನಾಟಕ ಬಿಟ್ಟುಹೋದ ಪ್ರಭಾಕರ, ‘ಹಿಂದೂ’ ಪತ್ರಿಕೆಯ ವರದಿಗಾರರಾಗಿ ಆಫ್ರಿಕಾ ಅಮೇರಿಕ ಬಾಂಗ್ಲಾದೇಶ ಈಶಾನ್ಯ ಭಾರತವನ್ನೆಲ್ಲ ಅಲೆದಾಡಿ, ಕಡೆಗೆ ಕಾಮರೂಪದಲ್ಲಿ (ಅಸ್ಸಾಮಿನ ಪುರಾತನ ಹೆಸರಿದು) ನೆಲೆಸಿಬಿಟ್ಟರು.
`ಕಾಮರೂಪ’ ಶಬ್ದಕ್ಕೆ ಬಯಸಿದ ರೂಪಧಾರಣೆ ಮಾಡುವ ಮಾಯಾವಿ ವಿದ್ಯೆ ಎಂಬರ್ಥವೂ ಇದೆ. ಎಂಬತ್ತರ ಪ್ರಾಯದಲ್ಲಿ ಕರ್ನಾಟಕಕ್ಕೆ ಮರಳಿ ಬಂದಿರುವ ಪ್ರಭಾಕರ ಅವರು, ತಾವು ಹುಟ್ಟಿಬೆಳೆದ ಮನೆಯಲ್ಲಿ ಬಿಡಾರ ಹೂಡಿದ್ದಾರೆ. ಹಿರೀಕರು ಕಟ್ಟಿದ ದೊಡ್ಡಮನೆ. ಮನೆಯೊಳಗೊಂದೇ ಜೀವ; ಮನೆ ತುಂಬ ಪುಸ್ತಕದ ರಾಶಿ (ಹೆಚ್ಚಿನವು ಇಂಗ್ಲೀಶ್ ಬಂಗಾಳಿ ಅಸ್ಸಾಮಿ). ನಟ್ಟನಡುವಿರುವ ಹಾಲಿನ ಮೂಲೆಯಲ್ಲಿ ಬೀದಿಗೆ ಬೆನ್ನುಕೊಟ್ಟಂತೆ ಕೂತು, ಲ್ಯಾಪ್ಟಾಪಿನಲ್ಲಿ ಬರೆಯುತ್ತ, ವೆಬ್ಸೈಟುಗಳನ್ನು ಜಾಲಾಡುತ್ತ, ಬ್ಲಾಗುಗಳನ್ನೋದುತ್ತ ಪ್ರಭಾಕರ ಕುಳಿತಿರುತ್ತಾರೆ.
ಅವರ ಮನಗೆ ಹೋದಾಗಲೆಲ್ಲ ನನಗೆ ರಾಗಿಮುದ್ದೆ ಸೊಪ್ಪಿನ ಸಾರಿನ ಊಟ ಸಿಗುತ್ತದೆ. ಅವರು ಉಣ್ಣುವುದೊಂದು ಅಪೂರ್ವ ದೃಶ್ಯ. ತಣಿಗೆಯ ನಡುವೆ ಹದವಾಗಿ ಬೆಂದು ಕಂಪು ಬೀರುವ ಗೋಂದಿನಂತಹ ಕೆಂಗಪ್ಪು ಬಣ್ಣದ ಬಿಸಿಮುದ್ದೆಯನ್ನಿಟ್ಟು, ಅದರ ತಲೆಯ ಮೇಲೆ ಶಿಖರವನ್ನು ಹಿಮವು ಅಲಂಕರಿಸುವಂತೆ ಬೆಣ್ಣೆಯ ಚೂರನ್ನಿಡುತ್ತಾರೆ; ಬೆಣ್ಣೆಯು ಮುದ್ದೆ ಕಾವಿಗೆ ಕರಗಿ ಇಡೀ ಚೆಂಡನ್ನು ಆವರಿಸಿ ಅಭಿಷೇಕ ಮಾಡಿಸಿಕೊಂಡ ಮೂರುತಿಯಂತೆ ಥಳಥಳ ಹೊಳೆಯುತ್ತದೆ. ಆಗ ಘಮಿಸುವ ಮುದ್ದೆಯನ್ನು ಚೆನ್ನಾಗಿ ಮಿದ್ದು, ಒಂದು ಬದಿಯಿಂದ ಇಷ್ಟಿಷ್ಟೇ ಮುರಿದು ತುತ್ತು ಮಾಡಿ, ಸೊಪ್ಪಿನ ಗಟ್ಟಿಸಾರಲ್ಲಿ ಹೊರಳಾಡಿಸಿ ಗುಕ್ಕನೆ ನುಂಗಿ ಕಣ್ಮುಚ್ಚಿ ಕೊಳ್ಳುತ್ತಾರೆ. ತರುವಾಯ ಶ್ರೀಯುತರು ಜ್ಞಾನೋದಯವಾದ ಸಿದ್ಧನಂತೆ ಅವರ ಮುಖದಲ್ಲಿ ಪರಮಾನಂದದ ಒಂದು ಕಳೆ ಆವಿರ್ಭವಿಸುತ್ತದೆ. ಇದನ್ನೆಲ್ಲ ಕಾಣುವಾಗ, ಲೋಕವನ್ನೆಲ್ಲ ಸುತ್ತಾಡಿರುವ ಇವರು ಕೋಲಾರಕ್ಕೆ ಮುದ್ದೆಸುಖಕ್ಕಾಗಿಯೆ ಬಂದರೇನೊ ಎಂದು ಶಂಕೆ ಬರುತ್ತದೆ. ಪ್ರಭಾಕರ ಅವರಿಗೆ ಆಧುನಿಕ ಕನ್ನಡ ಸಾಹಿತ್ಯದ ಮೇಲೆ ಅನೇಕ ದೂರುಗಳಿವೆ. ಅವುಗಳಲ್ಲಿ ಆಹಾರ ತಯಾರಿಕೆ ಮತ್ತು ಸೇವನೆ ಕುರಿತು ಅದರಲ್ಲಿ ವಿವರಗಳೇ ಇಲ್ಲ ಎಂಬುದೂ ಒಂದು.
ಕನ್ನಡದ ಅತಿಹಿರಿಯ ಮತ್ತು ಹೆಚ್ಚು ಬರೆಯದ ಲೇಖಕರಲ್ಲಿ ಪ್ರಭಾಕರ ಅವರೂ ಒಬ್ಬರು. ನಾನು ಅವರ ‘ಕುದುರೆಮೊಟ್ಟೆ’ ಕಾದಂಬರಿಯನ್ನೂ ‘ಒಂದು ತೊಲ ಪುನುಗು ಮತ್ತು ಇತರ ಕತೆಗಳು’ ಸಂಕಲನವನ್ನೂ ಓದಿದ್ದೆ. ಇವುಗಳಲ್ಲಿ ‘ಕುದುರೆ ಮೊಟ್ಟೆ’ ಈಗಲೂ ಪ್ರಿಯವಾದ ಪುಸ್ತಕ. ಅದರಲ್ಲಿರುವ ಕೆಲವು ಪಾತ್ರಗಳು ಕೊಂಚ ವಿಕ್ಷಿಪ್ತವಾಗಿವೆ; ಅಲ್ಲಿನ ಬಾಳಿನ ಸನ್ನಿವೇಶಗಳೂ ಅನಿರೀಕ್ಷಿತವಾಗಿವೆ. ಆದರೆ ಎಲ್ಲಿಯೂ ಹುಸಿ ಅನಿಸದಂತೆ, ಒಂದೇ ಶಬ್ದ ಅಪವ್ಯಯವಾಗದಂತೆ ಅದನ್ನು ಬರೆಯಲಾಗಿದೆ. ಪಾತ್ರಗಳನ್ನು ತಮ್ಮ ಸಿದ್ಧಾಂತಕ್ಕೆ ತಕ್ಕಂತೆ ಮಣಿಸಿ ಕೈಗೊಂಬೆಯಂತೆ ಆಡಿಸುತ್ತ, ಕೆಲವನ್ನು ಮುದ್ದಾಮಾಗಿ ದುರುಳಗೊಳಿಸಿ ಕಲೆಯ ಜಾಣಮುಸುಕಿನಲ್ಲಿ ಅಡಗಿಸುತ್ತ, ಕೆಲವು ಕಾದಂಬರಿಗಳು ಕನ್ನಡದಲ್ಲಿ ಪ್ರಕಟವಾಗುತ್ತಿವೆ. ಇಂತಹ ಹೊತ್ತಲ್ಲಿ ಅರ್ಧ ಶತಮಾನದ ಹಿಂದೆ ಪ್ರಕಟವಾದ ಈ ಕಾದಂಬರಿ, ಬಾಳನ್ನು ಕುರಿತು ತೋರುವ ಕಕ್ಕುಲಾತಿ ಕಂಡು ಖುಶಿಯಾಗುತ್ತದೆ. ಕತೆಗಾರರಿಗೆ ತಾವು ಸೃಷ್ಟಿಸುವ ಕೆಲವು ಪಾತ್ರಗಳ ಮೇಲೆ ಕೊಂಚ ಭಾವ ಪಕ್ಷಪಾತವಿರುತ್ತದೆ. ಆದರೆ ತಾವು ಸೃಜಿಸುವ ಎಲ್ಲ ಪಾತ್ರಗಳನ್ನು ತಾಯಿಯಂತೆ ನೋಡುವುದು ಬರೆಹದ ನೈತಿಕತೆ. ಈ ಸಂಗತಿ ಕುವೆಂಪು ಮತ್ತು ಟಾಲ್ ಸ್ಟಾಯ್ ಕಾದಂಬರಿ ಓದಿದವರಿಗೆ ಗೊತ್ತಿದೆ.
ಕಾಮವನ್ನು ಇಟ್ಟುಕೊಂಡು ಜೀವನದ ಸತ್ಯಗಳನ್ನು ಶೋಧಿಸುವ ವಿಷಯದಲ್ಲಿ ಕಾಮರೂಪಿಯವರು, ಒಬ್ಬ ಟಿಪಿಕಲ್ ನವ್ಯಲೇಖಕರೇ. ಆದರೆ ನವ್ಯದ ಕೆಲವು ಲೇಖಕರಲ್ಲಿ ಕಾಣುವಂತೆ, ಅದಕ್ಕವರು ಅನಗತ್ಯ ಪ್ರಾಮುಖ್ಯ ಕೊಡುವುದಿಲ್ಲ. ಅದನ್ನು ಚಪ್ಪರಿಸುವುದಿಲ್ಲ. ವೈಭವೀಕರಿಸುವುದಿಲ್ಲ. ಬದಲಿಗೆ, ಮನುಷ್ಯರಾದವರು ಜೀವನದ ಇಕ್ಕಟ್ಟುಗಳಲ್ಲಿ ಸಿಲುಕಿ ಅನಿವಾರ್ಯವಾಗಿ ವರ್ತಿಸುವ ಪರಿಯನ್ನು ತಣ್ಣಗೆ ವ್ಯಂಗ್ಯವಾಗಿ ಚಿತ್ರಿಸುತ್ತಾ ಹೋಗುತ್ತಾರೆ. ಸತ್ಯಕ್ಕಿರುವ ಹಲವು ಮುಖಗಳನ್ನು ಹಿಡಿಯುವಂತಹ ಕುರುಸೋವಾನ ‘ರಶೋಮನ್’ ಸಿನಿಮಾ ನೆನಪಿಸುವ ಈ ಕಾದಂಬರಿ, ಮತ್ತೆಮತ್ತೆ ಓದಬೇಕು ಎನಿಸುವಷ್ಟು ತಾಜಾ ಆಗಿದೆ. ‘ಉಪಪತ್ತಿಯೋಗ’ ಎಂಬುದನ್ನು ಬಿಟ್ಟರೆ, ಉಳಿದಂತೆ ವ್ಯಕ್ತಿವಾದವನ್ನು ಅತಿಯಾಗಿ ಬಿಂಬಿಸುವ ತಂತ್ರದ ಬಿಗಿತದಲ್ಲಿರುವ ಅವರ ಕತೆಗಳು ಅಷ್ಟು ಆಪ್ತವೆನಿಸಿಲ್ಲ.
ನನಗೆ ಪ್ರಭಾಕರ್ ಕುರಿತು ಆಸಕ್ತಿ ಮೂಡಿಸಿದವರು ಮಾರ್ಕ್ಸ್ವಾದಿ ಚಿಂತಕ ಕೆ.ರಾಘವೇಂದ್ರರಾವ್ ಅವರು. ಅಮೆರಿಕೆಯ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುತ್ತಿದ್ದ ಎ.ಕೆ.ರಾಮಾನುಜನರ ಹೊಂದಾಣಿಕೆಯ ಗುಣವನ್ನು ಕಟುವಾಗಿ ವಿಮರ್ಶಿಸುತ್ತ, ಅಲ್ಲಿನ ಶೈಕ್ಷಣಿಕ ಕ್ಷೇತ್ರದಲ್ಲಿರುವ ಬಿಳಿಯರ ಯಜಮಾನಿಕೆಗೆ ಬಾಗದೆ ಹೊರಬಂದ ಪ್ರಭಾಕರ ಅವರ ದಿಟ್ಟ ಸ್ವಭಾವವನ್ನು ಅವರು ತಮ್ಮ ಸಂದರ್ಶನದಲ್ಲಿ ಪ್ರಸ್ತಾಪಿಸಿದ್ದರು. ಪ್ರಭಾಕರ ಅವರನ್ನು ಭೇಟಿಯಾಗಬೇಕು ಎಂದು ಅನಿಸುತ್ತಿತ್ತು. ಅದರಲ್ಲೂ ಭಾರತದ ಶಾಕ್ತಪೀಠಗಳಲ್ಲಿ ಮುಖ್ಯವಾಗಿರುವ ಅಸ್ಸಾಮಿನ ಕಾಮಾಖ್ಯಕ್ಕೆ ಹೋಗಲು ಯತ್ನಿಸುತ್ತಿದ್ದ ನಾನು, ಅಲ್ಲೇ ಸಮೀಪದ ಗೌಹಾತಿಯಲ್ಲಿರುವ ಅವರನ್ನು ಕಾಣಲು ಹವಣಿಕೆ ಮಾಡಿಕೊಂಡಿದ್ದೆ. ಆದರೆ ಸಾರ್ವಜನಿಕ ವ್ಯಕ್ತಿಯಾಗಲು ನಿರಾಕರಿಸಿ ಅಜ್ಞಾತವಾಗಿಯೇ ಬಾಳುವ ಅವರು ಸುಲಭವಾಗಿ ಸಿಗುತ್ತಿರಲಿಲ್ಲ.
ನನ್ನ ತವಕವನ್ನರಿತಿದ್ದ ಕೆ.ರಾಮಯ್ಯ, ‘ಪ್ರಭಾಕರ್ ಕರ್ನಾಟಕಕ್ಕೆ ಬಂದಿದ್ದಾರೆ. ಬನ್ನಿ’ ಎಂದು ಅವರ ಮನೆಗೆ ಕರೆದುಕೊಂಡು ಹೋದರು. ಮಧ್ಯಾಹ್ನದ ಸುಡುಹೊತ್ತು. ಪ್ರಭಾಕರ ಪ್ರೀತಿಯಿಂದ ಬರಮಾಡಿಕೊಂಡು ನೊರೆ ತುಂಬಿದ ಒಗರು ಬೀರಿನ ಮಗ್ಗನ್ನು ಕೈಗೆ ಕೊಟ್ಟು, ಕಾಮಾಖ್ಯದ ಬಗ್ಗೆಯೂ ತಂತ್ರ ಪಂಥದ ಬಗ್ಗೆಯೂ ಇರುವ ಕೃತಿಗಳನ್ನು ತೋರಿಸುತ್ತ, ಗಂಟೆಗಟ್ಟಳೆ ಮಾತಾಡಿದರು. ಅರಿವಿನ ಕಿಡಿಗಳು ಹಾರುವ ಅದೊಂದು ವಿದ್ವತ್ಪೂರ್ಣ ಹರಟೆ.
ನಾನು ಅವರಲ್ಲಿ ಶಿಷ್ಯವೃತ್ತಿ ಸ್ವೀಕರಿಸಿ ಹಲವಾರು ಸಲ ಕೋಲಾರಕ್ಕೆ ಹೋಗಿ ಬಂದಿದ್ದೇನೆ. ಅವರ ಮಾತುಕತೆಗಳಲ್ಲಿ ನನಗೆ ಮುಖ್ಯವಾಗಿ ಕಂಡಿದ್ದು, ಜಾತ್ಯತೀತವಾದ ಮನಸ್ಸು; ಸಣ್ಣಪುಟ್ಟ ಸಂಗತಿಗಳ ಮೇಲೂ ಕಾಳಜಿಯಿಂದ ಸೂಕ್ಷ್ಮವಾಗಿ ಚಿಂತಿಸುವ ಮಾನವೀಯತೆ; ಗತಕಾಲದ ಬಗ್ಗೆ ಹಳಹಳಿಕೆಯಿಲ್ಲದೆ ವರ್ತಮಾನದ ಸಮಸ್ಯೆಗಳನ್ನು ಕುರಿತು ಚಿಂತಿಸುವ ಪ್ರಖರವೂ ನಿಷ್ಠುರವೂ ಆದ ರಾಜಕೀಯ ಪ್ರಜ್ಞೆ. ಸಾರ್ವಜನಿಕ ಬದುಕಿನಲ್ಲಿ ಜಾತಿಪದ್ಧತಿ ಎಲ್ಲೆಮೀರಿ ನಿರತವಾಗಿರುವ ಕುರಿತ ಹೇವರಿಕೆ. ಹಿರಿಯ ಲೇಖಕರಲ್ಲಿ ಸಾಮಾನ್ಯವಾಗಿ ಎರಡು ಸ್ವಭಾವಗಳಿರುತ್ತವೆ. ಒಂದು- ಕಳೆದುಹೋದ ಕಾಲದ ಬಗ್ಗೆ ಭಾವುಕ ಮರುಕಳಿಕೆ. ಎರಡು-ವರ್ತಮಾನದ ಸಾಮಾಜಿಕ ರಾಜಕೀಯ ವೈರುಧ್ಯಗಳನ್ನು ಉದಾರವಾಗಿ ನೋಡುತ್ತ, ಚಿಂತನೆಯ ಮೊನಚನ್ನು ಕಳೆದುಕೊಳ್ಳುವುದು. ಆದರೆ ಆತ್ಮಕ್ಕೆ ಸದಾ ಬೆಂಕಿ ಹತ್ತಿಸಿಕೊಂಡಂತೆ ಉರಿಯುವ ಕೆಲವರಿದ್ದಾರೆ. ಕೋಚೆ, ಕುಸುಮಾಕರ ದೇವರಗೆಣ್ಣೂರ, ಎಂ.ಡಿ. ನಂಜುಂಡಸ್ವಾಮಿ, ನೀಲಗಂಗಯ್ಯ ಪೂಜಾರ, ಕೆ.ರಾಘವೇಂದ್ರರಾವ್, ಅಬ್ಬಿಗೇರಿ ವಿರೂಪಾಕ್ಷಪ್ಪ, ಸಾರಾ ಅಬೂಬಕರ್, ಕಾಮರೂಪಿ ಪ್ರಭಾಕರ-ಇವರೆಲ್ಲ ಇಂತಹವರು. ಈ ಹಿರಿಯರ ಜತೆ ಮಾತಾಡುವಾಗ ಇವರ ಹಠಮಾರಿತನ, ಜಗಳಗಂಟಿತನ, ಆದರ್ಶವಾದ, ನೈತಿಕ ಪ್ರಜ್ಞೆ ಹಾಗೂ ಭಿನ್ನಮತ ಇಷ್ಟವಾಗುತ್ತದೆ.
ಕರ್ನಾಟಕದಿಂದ ಬಹುಕಾಲ ದೂರವಿದ್ದ ಕಾರಣದಿಂದ ಏರ್ಪಟ್ಟಿರುವ ಅಪರಿಚಿತತೆಯಿಂದಲೊ ಅಥವಾ ಕರ್ನಾಟಕದ ಒಳಗೇ ಇದ್ದೂಇದ್ದೂ ನಮಗೆ ಕಾಣದಂತಾಗಿರುವ ವೈರುಧ್ಯಗಳು ‘ಹೊರಗಿನಿಂದ’ ಬಂದಿರುವ ಅವರಿಗೆ ಒಡೆದು ಕಾಣುತ್ತಿರುವುದರಿಂದಲೊ, ಪ್ರಭಾಕರ ಕರ್ನಾಟಕದ ಸಮಕಾಲೀನ ಸಾಂಸ್ಕೃತಿಕ ರಾಜಕಾರಣದ ವೈರುಧ್ಯಗಳ ಬಗ್ಗೆ ತೀಕ್ಷ್ಣವಾದ ಟಿಪ್ಪಣಿ ಮಾಡುತ್ತಿರುತ್ತಾರೆ; ಕನ್ನಡಿಗರ ಸ್ವಭಾವದಲ್ಲೇ ವ್ಯಕ್ತಿನಿಷ್ಠೆಗಾಗಿ ವಿಮರ್ಶೆಯ ನಿಷ್ಠುರತೆ ಬಿಟ್ಟುಕೊಡುವ, ಸಜ್ಜನಿಕೆಯ ಭಾಷೆಯಲ್ಲಿ ವಾಸ್ತವವನ್ನು ಅಡಗಿಸುವ ಪ್ರವೃತ್ತಿಯಿದೆ ಎಂದು ಹೇಳುತ್ತಿರುತ್ತಾರೆ. ಸಂಘಟಕರೊಬ್ಬರು ಕಾರ್ಯಕ್ರಮವೊಂದಕ್ಕೆ ಕರೆಸಿಕೊಂಡು ಪರಿಚಯ ಭಾಷಣದಲ್ಲಿ ತಮ್ಮನ್ನು ಅತಿಯಾಗಿ ಹೊಗಳಿದ್ದನ್ನು ನೆನೆಯುತ್ತ ಅವರೊಮ್ಮೆ ಹೇಳಿದರು: “ಏನ್ ಸ್ವಾಮಿ ಕನ್ನಡಿಗರು? ಎಷ್ಟು ಉದಾರತೆ! ನನ್ನ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ. ನಾನು ಎಲ್ಲ ಸೇರಿದರೆ ನೂರೈವತ್ತು ಪುಟಗಳನ್ನೂ ಬರೆದಿಲ್ಲ. ಕನ್ನಡಕ್ಕೆ ದೊಡ್ಡ ಕೊಡುಗೆಯನ್ನು ಕೊಟ್ಟಿಲ್ಲ. ಆದರೂ ವಾಚಾಮಗೋಚರ ಹೊಗಳಿಬಿಟ್ಟರು. ಕರ್ನಾಟಕದಲ್ಲಿ ಮಾತಿಗೆ ಬೆಲೆಯೇ ಇದ್ದಂತಿಲ್ಲ.’’
ಇದನ್ನು ಕೇಳುವಾಗ ಈಚೆಗೆ ಕಲ್ಕತ್ತಾದಲ್ಲಿ ನಾನು ಕಂಡ, ಹಿರಿಯ ಲೇಖಕ ರುದ್ರಪ್ರತಾಪ ಸೇನರ ಸನ್ಮಾನ ಕಾರ್ಯಕ್ರಮ ನೆನಪಾಯಿತು. ಸೇನರಿಗೆ 75ವರ್ಷ ತುಂಬಿದ ನೆಪದಲ್ಲಿ ಇರಿಸಿಕೊಂಡಿದ್ದ ಆ ಕಾರ್ಯಕ್ರಮ ಎಷ್ಟು ವಿಮರ್ಶಾತ್ಮಕವಾಗಿತ್ತು ಎಂದರೆ, ಅವರ ಶಿಷ್ಯರು ತಮ್ಮ ಗುರುವಿನ ಜತೆ ಕೋರ್ಟ್ಮಾರ್ಶಲ್ ನಡೆಸುವವರ ಹಾಗೆ ಪ್ರಶ್ನೆ ಕೇಳುತ್ತಿದ್ದರು. ಸೇನರು ಆ ಕಟುತರ ಪ್ರಶ್ನೆಗಳಿಗೆಲ್ಲ ಪ್ರಾಮಾಣಿಕವಾಗಿ ದ್ವಂದ್ವವಿಲ್ಲದೆ ಉತ್ತರಿಸುತ್ತಿದ್ದರು. ಹಿರಿಯರ ತಲೆಗೆ ಅಭಿನಂದನ ಗ್ರಂಥಗಳ ಸರಮಾಲೆಯನ್ನು ತಂದು ಕಟ್ಟಿ, ಎಗ್ಗಿಲದೆ ಹೊಗಳಿ ವೈಭವೀಕರಿಸುವ ಪದ್ಧತಿಯಿರುವ ಕರ್ನಾಟಕದಲ್ಲಿ, ಈ ಪರಿಯ ನಿಷ್ಠುರತೆ ಕಲ್ಪಿಸಿಕೊಳ್ಳುವುದೇ ಕಷ್ಟ.
ತೋರುಗಾಣಿಕೆಯನ್ನು ಸದಾ ನಿರಾಕರಿಸುವ ಪ್ರಭಾಕರ ಅವರಲ್ಲಿ, ಅವರ ಖಂಡಿತವಾದಿ ನಿಲುವಿಗೆ ಅಷ್ಟೊಂದು ತಾಳೆಯಾಗದ ಇನ್ನೊಂದು ಮುಖವಿದೆ. ಅದೆಂದರೆ, ಜೀವನಪ್ರೀತಿಯ ಸಂಕೇತದಂತಿರುವ ತಮಾಶೆ ಮತ್ತು ಪೋಲಿತನ. ಈ ತಮಾಶೆಯ ಗುಣ ಅದ್ಭುತ ನಾಟಕೀಯ ಶೈಲಿಯಾಗಿ ಅವರ ಕಥೆ ಕಾದಂಬರಿಗಳಲ್ಲೆಲ್ಲ ಆವರಿಸಿಕೊಂಡಿದೆ. ತಮಗೆ ಪಾಠ ಹೇಳಿದ ಗುರುಗಳ ವೈಯಕ್ತಿಕ ಬದುಕಿನಲ್ಲಿದ್ದ ಸನಾತನವಾದ ಮತ್ತು ತರಗತಿಗಳಲ್ಲಿ ಕನ್ನಡ ಬಳಸದ ಅವರ ಇಂಗ್ಲಿಷಿನ ವ್ಯಾಮೋಹ ಕುರಿತಂತೆ, ಅವರಲ್ಲಿ ಸ್ವಾರಸ್ಯಕರ ಮಾಹಿತಿಗಳಿವೆ. ಪ್ರಭಾಕರ ಅವರು ಆಪ್ತರ ಎದುರು ತಾವು ಬರೆದಿರುವ ಅಪ್ರಕಟಿತ ಪೋಲಿ ಪದ್ಯಗಳನ್ನು ವಾಚಿಸುವುದುಂಟು. ಬಹುಶಃ ಇದು ಅವರ ಗೆಳೆಯರಾಗಿದ್ದ ಎಚ್.ಎಸ್. ಬಿಳಿಗಿರಿಯವರ ಸಹವಾಸ ಫಲವಿರಬೇಕು.
ಒಂದೇ ವ್ಯಕ್ತಿತ್ವದಲ್ಲಿ ಒಟ್ಟಿಗೇ ಇರಲು ಕಷ್ಟವೆನಿಸಬಹುದಾದ ಇನ್ನೂ ಅನೇಕ ಸಂಗತಿಗಳು ಅವರಲ್ಲಿ ಸಹಜವಾಗಿ ನಿರಾಳವಾಗಿ ಇವೆ. ಉದಾ.ಗೆ, ಬಹುಭಾಷಿಕರಾದ ಅವರ ಮನೆಮಾತು ತಮಿಳುಗನ್ನಡ; ಬರವಣಿಗೆ ಕನ್ನಡ ಮತ್ತು ಇಂಗ್ಲೀಶಿನಲ್ಲಿ; ಸಂಸ್ಕೃತ ಅಸ್ಸಾಮಿ ಬಂಗಾಳಿ ಭಾಷೆಗಳಲ್ಲಿ ದೊಡ್ಡ ವಿದ್ವತ್ತು. (ಅವರ ಅಸ್ಸಾಮಿ ಬಂಗಾಳಿ ತಿಳಿವಳಿಕೆಯಿಂದ ಕನ್ನಡಕ್ಕೆ ಪ್ರಯೋಜನವಿನ್ನೂ ಆಗಿಲ್ಲ). ಪಂಪ ಅವರ ಇಷ್ಟದ ಕವಿ. ಮೂಲತಃ ಇಂಗ್ಲೀಶ್ ಸಾಹಿತ್ಯದ ವಿದ್ಯಾರ್ಥಿಯಾದರೂ ಸಾಹಿತ್ಯಕ್ಕಿಂತ ಹೆಚ್ಚಾಗಿ ಅಂತರಾಷ್ಟ್ರೀಯ ರಾಷ್ಟ್ರೀಯ ರಾಜಕಾರಣದ ಮೇಲೆ ಹೆಚ್ಚು ಬರೆವಣಿಗೆ. ಅದರಲ್ಲೂ ಈಶಾನ್ಯ ಭಾರತದ ರಾಜಕಾರಣ ಭಾಷೆ ಧರ್ಮ ಸಂಸ್ಕೃತಿ ಕುರಿತ ಅವರ ತಿಳಿವಳಿಕೆ ಅಪರೂಪದ್ದು. ಇವನ್ನೆಲ್ಲ ಒಟ್ಟಿಗೆ ಹೇಗೆ ಕಲ್ಪಿಸಿಕೊಳ್ಳುವುದು? ಪ್ರಭಾಕರ ತಮ್ಮ ಕಾದಂಬರಿಯ ಒಂದು ಪಾತ್ರದ ಹಾಗೇ ಬದುಕಿದ್ದಾರೆ.
ಅವರು ಈಚೆಗೆ ಮಾತಾಡುತ್ತ ಕೊಂಚ ದಣಿದ ದನಿಯಲ್ಲಿ “ಸ್ವಾಮಿ, ಕರ್ನಾಟಕ ನನಗೆ ಸಾಕಾಗಿದೆ. ಗೌಹಾಟಿಗೆ ಹೋಗಬೇಕು ಅನಿಸುತ್ತಿದೆ’ ಎಂದು ಗೊಣಗಿದರು. “ಹೋಗಿ. ಆದರೆ ಮತ್ತೆಬನ್ನಿ’’ ಎಂದೆ. ಅವರಲ್ಲಿ ಕೋಲಾರ-ಗೌಹಾತಿಗಳ ನಡುವೆ ವಿಚಿತ್ರವಾದ ಆಕರ್ಷಣೆ ವಿಕರ್ಷಣೆಯಿದೆ. ಇದು ಬಹುಕಾಲ ಬೇರೆಡೆ ಬೆಳೆದ ಮರ ತನ್ನ ಮೂಲನೆಲಕ್ಕೆ ಬಂದು ನಾಟಿಗೊಂಡರೆ ಬೇರೂರುವ ಕಷ್ಟ. ಮರಳಿ ಹುಟ್ಟಿದೂರಿಗೆ ಬರುವಿಕೆ ಬಾಲ್ಯದ ನೆನಪುಗಳನ್ನು ಎಚ್ಚರಿಸಿ ಸುಖ ಕೊಡುತ್ತದೆ; ಆದರೆ ಹೊಚ್ಚ ಹೊಸತೆೆನಿಸುವಷ್ಟು ಬದಲಾಗಿರುವ ಪರಿಸರವು, ಕಾಡುವ ಏಕಾಂಗಿತನವನ್ನೂ ತಂದಿಡುತ್ತದೆ. ಯಾರ ಮರುಕವನ್ನೂ ಬಯಸದೆ ಏಕಾಂತದಲ್ಲಿ ಘನತೆಯಿಂದ ಕೊನೆಯ ದಿನಗಳನ್ನು ಕಳೆಯ ಬಯಸುವ ಇಂತಹ ಹಠಮಾರಿ ಜೀವಗಳು, ಒಳಗೇ ಮೃದ್ವಂಗಿಗಳಾಗಿ ಆಪ್ತಸಂಗಾತಕ್ಕೆ ಹಾತೊರೆಯುತ್ತಿರುತ್ತವೆ.
ಆ ಸಂಗಾತದ ಸ್ವರೂಪ ಎಂತಹುದು ಎಂದು ಸ್ಪಷ್ಟವಾಗುವುದಿಲ್ಲ. ನಾನು ‘ಕಾಮರೂಪಕ್ಕೆ ಯಾವಾಗ ಹೋಗುತ್ತೀರಿ’ ಎಂದು ಕೇಳಿದೆ: ‘ಆದಿಮದ 50ನೇ ಬೆಳುದಿಂಗಳ ಕಾರ್ಯಕ್ರಮ ಮುಗಿಸಿಕೊಂಡು’ ಎಂದರು.
ಪ್ರತಿಯೊಬ್ಬರಿಗೂ ಬಾಳಿನಲ್ಲಿ ಬಹುರೂಪಧಾರಣೆ ಮಾಡಬೇಕಾದ ಒತ್ತಡಗಳು ಎದುರಾಗಬಹುದು. ಆದರೆ ಈ ರೂಪಧಾರಣೆಗೆ ಕಾರಣ, ನಮ್ಮ ಇಚ್ಛಾನಿಚ್ಛೆಗಳು ಮಾತ್ರವಲ್ಲ, ಬಾಳಿನ ಅನೂಹ್ಯ ಒತ್ತಡಗಳು ಸಹ. ಈ ಒತ್ತಡಗಳು ಬರೆಹ ಇಲ್ಲವೇ ಮಾತಿನ ವ್ಯಾಖ್ಯಾನಕ್ಕೆ ಕೆಲವೊಮ್ಮೆ ನಿಲುಕುವಂತೆ ಇರುವುದಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

-
ದಿನದ ಸುದ್ದಿ6 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ6 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ7 hours agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ



