ನೆಲದನಿ
ನುಡಿಯ ಒಡಲು – 02 : ಕನ್ನಡವೇ ಸತ್ಯ ಕನ್ನಡವೇ ನಿತ್ಯ..?
- ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಮುನ್ನೋಟ
ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂಬೀ ಕವಿಯ ಮಾತುಗಳು ಬಹುದಿನದಿಂದ ನನ್ನನ್ನು ಕಾಡುತ್ತಿರುವ ಮತ್ತು ಮತ್ತೆ ಮತ್ತೆ ಕೆದಕುತ್ತಿರುವ ಮಾತುಗಳಾಗಿವೆ. ಕನ್ನಡ ನುಡಿ, ಸಂಸ್ಕøತಿ ಕುರಿತು ಕುವೆಂಪು ಅವರಿಗೆ ಇರುವ ನಂಬಿಕೆಯ ಬಗೆಗೆ ನನಗೆ ಯಾವುದೇ ಅನುಮಾನವಿಲ್ಲ.
ಇಪ್ಪತ್ತನೇ ಶತಮಾನದಲ್ಲಿ ಕರ್ನಾಟಕದ ಸಮೂಹಗಳಲ್ಲಿ ಒಂದು ವೈಚಾರಿಕ ತಿರುವನ್ನು ಕಾಣುವುದಾದರೆ, ಅದು ಮೊದಲು ನೆಲೆ ಪಡೆದುಕೊಂಡಿದ್ದು ಕುವೆಂಪು ಅವರ ಬರಹಗಳಲ್ಲಿ ಮಾತ್ರ. ಆದರೆ ಅವರು ತಮ್ಮೀ ಹಾಡಿನಲ್ಲಿ ಬಳಸಿಕೊಂಡಿರುವ ಸತ್ಯ ಮತ್ತು ನಿತ್ಯ ಎಂಬೆರಡೂ ಪದಗಳು ನುಡಿಯರಿಮೆಯ ವಿದ್ಯಾರ್ಥಿಯೊಬ್ಬನನ್ನು ಏಕೆ ಕೆಣಕುತ್ತಿವೆ ಹಾಗೂ ಅಣಕಿಸುತ್ತವೆ ಎಂಬುದನ್ನು ಚರ್ಚಿಸಬೇಕಿದೆ.
ಹೌದು, ಈ ಪದಗಳ ಮೂಲಕ ಕನ್ನಡ ನುಡಿ ಮತ್ತು ಕನ್ನಡ ಮಾತ್ನಾಡುವ ಸಮೂಹಗಳ ನಡುವಣ ನಂಟಸ್ತಿಕೆಯ ದಿಟ ಚಹರೆಗಳನ್ನು ಕಂಡರಿಸುವ ಉದ್ದೇಶವನ್ನು ಕುವೆಂಪು ಅವರಲ್ಲಿ ಕಾಣುತ್ತೇವೆ. ಆದಾಗ್ಯೂ ಈ ಎರಡೂ ಪದಗಳ ಬಗೆಗಿರುವ ನನ್ನ ಅನುಮಾನದಲ್ಲಿ ಯಾವುದೇ ವ್ಯತ್ಯಾಸವನ್ನು ಇಲ್ಲಿ ಗುರುತಿಸಲು ಆಗುವುದಿಲ್ಲ.
ಏಕೆಂದರೆ ಸತ್ಯ ಮತ್ತು ನಿತ್ಯ ಎಂಬೀ ಪದಗಳು ಕನ್ನಡವನ್ನೇ ನಂಬಿ ಬದುಕಿತ್ತಿರುವ ಜನಸಮೂಹಗಳ ಪದಕೋಶದಲ್ಲಿ ನೆಲೆನಿಂತು, ಅವರ ಬದುಕಿನ ವಿನ್ಯಾಸಗಳನ್ನು ವಿವರಿಸುವ ಪರಿಕರಗಳಾಗಿ ಈ ಪದಗಳು ಯಾವ ಕಾಲಕ್ಕೂ ಬಳಕೆಯಾಗಿರುವುದನ್ನು ನೋಡಲು ಆಗುವುದಿಲ್ಲ. ಇರಲಿ ಕುವೆಂಪು ಅವರ ನುಡಿ ಬಗೆಗಿನ ನಿಲುವುಗಳನ್ನು ಕುರಿತು ಒಂದಿಷ್ಟು ಚರ್ಚೆಗಳನ್ನು ಬೆಳೆಸಿ, ನಂತರ ಸತ್ಯ ಮತ್ತು ನಿತ್ಯ ಪದಗಳ ಬಗೆಗಿನ ನನ್ನ ತಕರಾರುಗಳನ್ನು ಕುರಿತು ಮಾತ್ನಾಡುತ್ತೇನೆ.
ಜನ ಬದುಕಲೆಂದೆ ಹಾಡು..!
“ಜನ ಬದುಕಲೆಂದೆ ಹಾಡು…..” ಎಂಬ ತತ್ವವನ್ನು ನಂಬಿ ಬರೆದ ಕುವೆಂಪು ಅವರು, ಈ ಎರಡೂ ಪದಗಳನ್ನು ಜನರ ಬದುಕಿನ ಸೂಚಕಗಳನ್ನಾಗಿ ಕಾಣಿಸುವ ಇರಾದೆಯಿಂದಲೇ ಬಳಸಿರುತ್ತಾರೆ. ಆದರೆ ಈ ಪದಗಳಿಗೆ ಅಂಟಿದ ಪರಂಪರೆಯ ಸೋಂಕಿನಿಂದ ಇವುಗಳಿಗೆ ಇವತ್ತಿಗೂ ಪಾರಾಗಲು ಸಾಧ್ಯವಾಗಿಲ್ಲ. ಅಂದರೆ ಈ ಪದಗಳ ಸೂಚಿತ ನೆಲೆಗಳು ಈ ಹೊತ್ತಿಗೂ ಸಾಮಾಜಿಕ ಬೇರೆತನವನ್ನೇ [ಸೋಶಿಯಲ್ ಏಲಿನೇಶನ್] ನೆಲೆಗೊಳಿಸುವ ಹುನ್ನಾರವನ್ನು ಮಾಡುತ್ತಿವೆ.
ಪದಗಳಲ್ಲಿ ಹೀಗೆ ಅಂತರ್ನಿತವಾಗಿರುವ ಆಯಾ ಪರಂಪರೆಯ ಸಾಮಾಜಿಕ ನಿಲುವುಗಳು ಸಮೂಹಗಳ ಸಾಂಸ್ಕøತಿಕ ಸೀಳುಗಳಿಗೆ ಕಾರಣವಾಗುತ್ತವೆ. ಅನಾದಿ ಕಾಲದಿಂದಲೂ ಸಮುದಾಯಗಳ ಒಳಗೆ ಹುದುಗಿರುವ ಇಂತಹ ಹುನ್ನಾರಗಳ ವಿನ್ಯಾಸವನ್ನು ಅತ್ಯಂತ ನಿಚ್ಚಳವಾಗಿ ತಮ್ಮ ಒಟ್ಟು ಬರಹಗಳಲ್ಲಿ ಕುವೆಂಪು ಅವರು ತೋರಿಸಿಕೊಟ್ಟಿರುವವರು. ಹಾಗಾಗಿ ನಿತ್ಯ ಮತ್ತು ಸತ್ಯ ಪದಗಳು ಪ್ರತಿನಿಧಿಸುವ ಯಾವುದೇ ಬಗೆಯ ಸಾಮಾಜಿಕ ಯಜಮಾನಿಕೆ ಮತ್ತು ಸಾಂಸ್ಕøತಿಕ ರಾಜಕೀಯ ಹುನ್ನಾರಕ್ಕೆ ಕುವೆಂಪು ಅವರು ಕಾರಣವಲ್ಲ.
ಇಂತಹ ವಿನ್ಯಾಸಗಳನ್ನು ನಿರಚನಗೊಳಿಸುವ ಬಗೆಯೇ ಕುವೆಂಪು ಅವರ ಸಾಹಿತ್ಯದ ಗುರಿಯಾಗಿದೆ. ಆದರೆ ಕನ್ನಡ ನುಡಿಯು ರೂಪಿಸಿಕೊಂಡ ಪದಕೋಶ ಹಾಗೂ ತಿರುಳಿನ ಸಾಮಾಜಿಕ ಚೌಕಟ್ಟುಗಳು ಮಾತ್ರ ಜನಪರವಾದ ನಿಲುವುಗಳನ್ನು ಯಾವತ್ತಿಗೂ ಪಡೆದುಕೊಳ್ಳಲಿಲ್ಲ. ಸಮೂಹಗಳ ಬಗೆಗೆ ಕಾಳಜಿಯನ್ನು ಹೊಂದಿರುವವರು, ಜನಪರವಾದ ತುಡಿತವನ್ನು ಮಾತ್ರ ನಟಿಸುವ ಹುನ್ನಾರವನ್ನು ಮಾಡಿದರೇ ಹೊರತು, ಕನ್ನಡದ ಅಸ್ತಿತ್ವದ ಪ್ರಶ್ನೆಗಳನ್ನು ಕೈಗೆತ್ತಿಕೊಳ್ಳುವುದು ಇವರಾರಿಗೂ ಮುಖ್ಯವಾಗಲಿಲ್ಲ.
ಅದಕ್ಕಾಗಿಯೇ, ಕನ್ನಡ ನುಡಿಯ ಪದಕೋಶ ಮತ್ತು ಸಮುದಾಯಗಳ ನಡುವಣ ಬಿಕ್ಕಟ್ಟುಗಳನ್ನು ಬಗೆಹರಿಸುವ ತುಡಿತದಿಂದ ಕುವೆಂಪು ಅವರು ಭಾಷಿಕ ಎಲ್ಲೆಗಳನ್ನು ಮೀರಿ ಹೊಸಗನ್ನಡದ ಪದಕೋಶವನ್ನು ರೂಪಿಸಿರುವುದನ್ನು ನೋಡಬಹುದು. ಇಂತಹ ಭಾಷಿಕ ಪ್ರಕ್ರಿಯೆಯಲ್ಲಿ ಕುವೆಂಪು ಅವರ ನಿಗಾಯಿರುವುದು ಕೇವಲ ಕನ್ನಡನುಡಿ ಚಹರೆಗಳನ್ನು ನೆಲೆಗೊಳ್ಳಿಸುವುದು ಮಾತ್ರವಲ್ಲ.
ಬದಲಾಗಿ ಕನ್ನಡ ನುಡಿ ಸಮೂಹಗಳಿಗೆ ಬೇಕಿರುವ ಜ್ಞಾನಶಿಸ್ತೀಯ [ಎಪಿಸ್ಟಿಮಾಲಜಿ] ನೆಲೆಗಳನ್ನು ಕನ್ನಡದ ಮೂಲಕವೇ ಸಜ್ಜುಗೊಳಿಸುವ ಬಗೆಗಳನ್ನು ಹುಟ್ಟು ಹಾಕುವುದಾಗಿತ್ತು. ಹಾಗಾಗಿಯೇ ಇವರು ತಮ್ಮ ಸಾಹಿತ್ಯದ ನಿರೂಪಣೆಯಲ್ಲಿ ಹಲವು ಬಗೆಯ ಪರಿಭಾಷೆಗಳನ್ನು [ರೆಜಿಸ್ಟರ್ಸ್] ರೂಪಿಸಿಕೊಂಡು ಬಳಸಿದರು. ಕಾಲ ದೇಶಗಳ ಹಂಗು ಮೀರಿದ ಕನ್ನಡದ ಪದಕೋಶ ಮತ್ತು ಪದಕಟ್ಟೋಣವನ್ನು ಕುವೆಂಪು ಅವರಲ್ಲಿ ಕಾಣಬಹುದು.
ಹಾಗಾಗಿ ಹಳಗನ್ನಡ, ಒಳನುಡಿ, ಕನ್ನಡ ರಚನೆಯೊಳಗೆ ಸಂಸ್ಕøತ ರೂಪಗಳನ್ನು ಬಳಸಿಕೊಂಡದ್ದು [ಇಂತಹ ಪ್ರಯೋಗಗಳನ್ನು ಸಂಸ್ಕ್ರುತಭೂವಿಷ್ಠವೆಂದೂ ಆರೋಪಿಸಲಾಗುತ್ತದೆ] ಮುಂತಾದ ಬಗೆಗಳಲ್ಲಿ ಇವರ ನುಡಿ ನಿರೂಪಣೆಗಳಲ್ಲಿ ನೋಡಬಹುದು. ಇದು ಕೇವಲ ಸಾಹಿತ್ಯ ಸೃಷ್ಟಿಯಲ್ಲಿ ನಡೆದ ಪ್ರಾಯೋಗಿಕ ನೆಲೆ ಮಾತ್ರವಲ್ಲ. ನುಡಿಯೊಂದರ ದಿಟ ಕಸುವನ್ನು ಬಳಸಿಕೊಂಡು ಜ್ಞಾನಶಿಸ್ತುಗಳನ್ನು ಕಟ್ಟುವ ಬಗೆಗಳನ್ನು ರುಜುಪಡಿಸುವ ರೀತಿಯಾಗಿದೆ.
ಕುವೆಂಪು ಅವರಿಗೆ ಪದಗಳು ಕೇವಲ ಪದಗಳಲ್ಲ, ಅವುಗಳನ್ನು ಪರಿಕಲ್ಪನೆಗಳನ್ನಾಗಿ ಹಾಗೂ ಸಾಂಸ್ಕøತಿಕ ವಿದ್ಯಮಾನದ ಸೂಚಕಗಳನ್ನಾಗಿ ಬಳಸುತ್ತಾರೆ. ಭಾವೋಪಯೋಗಿ ಮತ್ತು ಲೋಕೋಪಯೋಗಿ ಎಂಬ ಕುವೆಂಪು ಅವರ ಭಾಷಿಕ ಪರಿಕಲ್ಪನೆಗಳೇ ಇದಕ್ಕೆ ಸಾಕ್ಷಿಯಾಗಿವೆ.
ಕುವೆಂಪು ಅವರ ಕನ್ನಡತನ
ಕುವೆಂಪು ಅವರ ಕಣ್ನೋಟದಲ್ಲಿ ಕನ್ನಡತನ ಎಂಬುದು ಕೇವಲ ನುಡಿ ಬಗೆಗಿನ ಒಲವು ಮಾತ್ರವಲ್ಲ. ದೇಶ ಕಾಲಗಳ ಹಂಗು ಮೀರಿ ಕರ್ನಾಟಕದ ಸಮೂಹಗಳ ಬದುಕಿನ ಒಟ್ಟು ವಿನ್ಯಾಸವನ್ನು ನಿರಂತರಗೊಳಿಸುವ ಬಗೆಯೇ ಕನ್ನಡತನವಾಗಿದೆ. ಬದುಕಿನ ಎಲ್ಲಾ ವಲಯಗಳಲ್ಲಿ ನಡೆಯುವ ಕ್ರಿಯೆ ಮತ್ತು ಪ್ರಕ್ರಿಯೆಗಳು ಕನ್ನಡದ ಮೂಲಕ ನೆಲೆಪಡೆಯುವ ಬಗೆಯೂ ಇದಾಗಿರುತ್ತದೆ.
ಅಂದರೆ ಸಾಮಾಜಿಕ-ಮಾನಸಿಕ ಗ್ರಹಿಕೆಯ ಮಾದರಿಗಳು ರೂಪುಗೊಳ್ಳುವುದು ನುಡಿಯ ಮೂಲಕ. ಕನ್ನಡವನ್ನೆ ನೆಮ್ಮಿ ಬದುಕುವ ಕರ್ನಾಟಕದ ಸಮೂಹಗಳ ಈ ಮಾದರಿಗಳು ಕನ್ನಡದ ಮೂಲಕವೇ ಅಸ್ತಿತ್ವಕ್ಕೆ ಬರುತ್ತವೆ. ಬದುಕು ಮತ್ತು ನುಡಿಯ ನಡುವಣ ಹೊಂದಾಣಿಕೆಯ ಈ ವಿನ್ಯಾಸಗಳನ್ನೇ ಕನ್ನಡತನ ಎಂದು ಹೇಳಬಹುದು. ಈ ಬಗೆಯ ಕನ್ನಡತನದ ಚಹರೆಗಳು ನೆಲೆನಿಲ್ಲುವ ಸ್ವರೂಪವನ್ನು ಕುವೆಂಪು ಅವರು ಸತ್ಯ ಮತ್ತು ನಿತ್ಯ ಎಂಬ ಪರಿಕಲ್ಪನೆಗಳ ಮೂಲಕ ನಿಚ್ಚಳಗೊಳಿಸಿದ್ದಾರೆ.
ಇಪ್ಪತ್ತನೆಯ ಶತಮಾನದಲ್ಲಿ ಕನ್ನಡವನ್ನು ಒಂದು ಸಾಂಸ್ಕøತಿಕ ವಿದ್ಯಮಾನವನ್ನಾಗಿ ರೂಪಿಸುವಲ್ಲಿ ಕುವೆಂಪು ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದರೆ ಕನ್ನಡ ಜಗತ್ತನ್ನು ಮುನ್ನೆಡೆಸುವ ಹೊಣೆಯನ್ನು ಹೊತ್ತವರು, ಕುವೆಂಪು ಅವರು ನಿಲುವುಗಳನ್ನು ಪರಿಗಣಿಸಲೆಯಿಲ್ಲ. ನುಡಿ ಬಗೆಗಿನ ಕುವೆಂಪು ಅವರ ನಿಲುವುಗಳನ್ನು ಕೇವಲ ಸಾಹಿತ್ಯಕ ಪ್ರಯೋಗಗಳನ್ನಾಗಿ ಗುರುತಿಸಲಾಗಿದೆ. ಇಂತಹ ಪ್ರಯೋಗಗಳನ್ನು ಬಹುತೇಕವಾಗಿ ನೆಗಟಿವ್ ನಿಲುವುಗಳನ್ನಾಗಿಯೇ ಆ ಹೊತ್ತಿನ ಕನ್ನಡ ತಿಳಿವಿನ ಲೋಕ ಪರಿಗಣಿಸಿರುವುದನ್ನು ಇಲ್ಲಿ ಗಮನಿಸಬಹುದು.
ಕನ್ನಡದ ಬೆಳವಣಿಗೆ ಇಲ್ಲವೇ ಏಳ್ಗೆ ಎಂಬುದನ್ನು ಒಂದು ಭಾವನಾತ್ಮಕ ನೆಲೆಯನ್ನಾಗಿಸುವುದೇ ಕನ್ನಡತನದ ನಿಲುವಾಗಿತ್ತು. ಕನ್ನಡತನವೆನ್ನುವುದು ಭಾವನೆಗೆ ಮಾತ್ರ ಸಂಬಂಧಿಸಿದ ಸಂಗತಿಯಲ್ಲ ಅದು ಬದುಕಿಗೆ ಸಂಬಂಧಿಸಿದ ವಿದ್ಯಮಾನವಾಗಿದೆ. ಅಂದರೆ ಬದುಕನ್ನು ನಿರ್ವಹಿಸುವ ಬಗೆಗಗಳು ಆಯಾ ಸಮುದಾಯದ ಒಡಲಲ್ಲಿ ಹುದುಗಿರುತ್ತವೆ. ಇಂತಹ ರಾಚನಿಕ ಸಂಗತಿಗಳನ್ನು ಅಯಾ ಸಮೂಹಗಳ ನುಡಿಯು ಜೋಪಾನ ಮಾಡಿಕೊಂಡು ಬಂದಿರುತ್ತದೆ. ಆಯಾ ಸಮುದಾಯಗಳ ನುಡಿ ಬೆಳವಣಿಗೆಯೇ, ಅವರವರ ಬದುಕಿನ ಏಳ್ಗೆಯನ್ನು ಸೂಚಿಸುವ ಸೂಚಕವಾಗಿರುತ್ತದೆ.
ಕನ್ನಡ ನುಡಿಯು ಹಲವು ಶತಮಾನಗಳಿಂದ ಎಷ್ಟೊಂದು ತಲೆಮಾರುಗಳ ಬದುಕುಗಳನ್ನು ನಿರ್ವಹಿಸಿಕೊಂಡು ಬಂದಿದೆ ಎಂಬುದನ್ನು ನೆನಪಿಸಿಕೊಂಡರೆ, ಕನ್ನಡ ಜಗತ್ತಿನ ವಿವೇಕದ ಹರವು ನಮ್ಮ ಗಮನಕ್ಕೆ ಬರುತ್ತದೆ. ಇಂತಹ ವಿವೇಕದ ನಿರಂತರತೆ, ಬೆಳವಣಿಗೆ ಮತ್ತು ಬದುಕಿನ ಬಹುಳತೆಯ ಮಾದರಿಗಳನ್ನು ಮುನ್ನೆಡೆಸಿಕೊಂಡು, ಆಯಾ ಹೊತ್ತಿನ ಬಾಳಿಗೆ ಬೇಕಾಗುವ ಎಲ್ಲ ರೀತಿಯ ಅಗತ್ಯಗಳನ್ನು ಪೊರೈಸಿಕೊಳ್ಳುವುದೆ ಕನ್ನಡತನವಾಗಿದೆ.
ಜನರ ಇಂತಹ ನಿಲುವುಗಳನ್ನೆ ಸಾಕಾರಗೊಳಿಸುವ ನುಡಿಯಾಗಿರುವ ಕನ್ನಡವೇ ಸತ್ಯ ಮತ್ತು ಕನ್ನಡವೇ ನಿತ್ಯವೆಂದು ಕುವೆಂಪು ಅವರು ಹೇಳಿರುವರು. ಇದನ್ನು ಕೇವಲ ಒಂದು ರಾಜಕೀಯ ಸ್ಲೋಗನ್ನಿನ ನೆಲೆಗೆ ತಂದಿರಿಸಲಾಗಿದೆ. ಇದೊಂದು ಚಾರಿತ್ರಿಕ ವಿಪರ್ಯಾಸವೇ ಸರಿ. ಕುವೆಂಪು ಮಂಡಿಸುವ ಕನ್ನಡತನದ ಈ ನಿಲುವುಗಳನ್ನು ಬರೀ ಹುಸಿಕಲ್ಪನೆಗಳನ್ನಾಗಿ ಬಿಂಬಿಸಲಾಗಿದೆ. ಹಾಗಾಗಿಯೇ ಇಂಗ್ಲಿಶು ಮತ್ತು ಸಂಸ್ಕøತ ನುಡಿಗಳು ಕನ್ನಡ ನುಡಿ ಸಮುದಾಯದೊಳಗೆ ಹೆಚ್ಚು ಹೆಚ್ಚು ಮಹತ್ವವನ್ನು ಪಡೆದುಕೊಳ್ಳುತ್ತವೆ.
ಈ ನುಡಿಗಳ ಎದುರಿಗೆ ಕನ್ನಡದ ಕಸುವು ಮತ್ತು ಚಲನಶೀಲತೆಯನ್ನು ಕುಂದಿಸುವ ಹುನ್ನಾರವು ಇದಾಗಿದೆ. ಕನ್ನಡವೆಂದರೆ ಅದೊಂದು ಪಾಳುಬಿದ್ದ ನೆಲ ಎನ್ನುವ ಧೋರಣೆಗೂ ಈ ಹುನ್ನಾರವು ಕಾರಣವಾಗುತ್ತದೆ. ಕನ್ನಡವನ್ನೇ ನೆಮ್ಮಿದ ಸಮೂಹಗಳು ಒಂದು ಬಗೆಯ ಅತಂತ್ರ ನೆಲೆಗೆ ಸಿಕ್ಕುಬಿದ್ದು ನರಳುತ್ತವೆ. ಶಿಕ್ಷಣ ಮಾಧ್ಯಮ ಕುರಿತಾದ ನಿಲುವುಗಳನ್ನು ನಿಗಾಯಿಟ್ಟು ಪತ್ತೆಹಚ್ಚಿದರೆ ಇಂತಹವೇ ಕಾರಣಗಳು ಅಲ್ಲಿ ಮುಂಚೂಣೆಯಲ್ಲಿರುತ್ತವೆ. ಏಕೆಂದರೆ ಕನ್ನಡದ ಬಗೆಗಿನ ಅಪನಂಬಿಕೆಯನ್ನು ಈ ನಿಲುವುಗಳು ಮತ್ತಷ್ಟು ತೀವ್ರಗೊಳಿಸುತ್ತವೆ.
ಆದ್ದರಿಂದ ಕನ್ನಡಿಗರಿಗೆ ಮಾಧ್ಯಮದ ಪ್ರಶ್ನೆ ಎದುರಾದಗೆಲ್ಲ, ಕನ್ನಡ ಮತ್ತು ಇಂಗ್ಲಿಶು ನುಡಿಗಳ ನಡುವೆ ಹೋಲಿಕೆ ಇರುತ್ತದೆ. ಈ ಹೋಲಿಕೆಯಲ್ಲಿ ಇಂಗ್ಲಿಶು ಯಾವತ್ತಿಗೂ ಗೆಲ್ಲುವ ಕುದುರೆಯಾಗಿಯೇ ಕಾಣುತ್ತದೆ. ಸಹಜವಾಗಿ ಕನ್ನಡವೆಂದರೆ ಅದೊಂದು ಊನಗೊಂಡ ಕುದುರೆಯಾಗಿ ತೋರುತ್ತದೆ. ಈ ಕಾರಣಗಳಿಗಾಗಿಯೇ ಕನ್ನಡವೆನ್ನುವುದು ನಮ್ಮ ಸಮೂಹಗಳ ಬದುಕಿಗೆ ಹೊರೆಯಾಗಿ ಪರಿಣಮಿಸುತ್ತದೆ.
ತನ್ನ ಮತ್ತು ಬೇರೆತನದ ಡೈಕಾಟಮಿ
ಮತ್ತೊಂದು ಬಗೆಯ ಹುನ್ನಾರದ ಮಾದರಿ ಯಾವುದೆಂದರೆ, ಕನ್ನಡದ ಗುರುತು ಇಲ್ಲವೇ ಅಸ್ಮಿತೆಯನ್ನು ನೆಲೆಗೊಳಿಸಲು, ಅಧಿಕಾರ ಮತ್ತು ನೈತಿಕತೆಯ ಸವಾಲುಗಳನ್ನು ಎದುರಿಗೆ ಇಡಲಾಗುತ್ತದೆ. ಕನ್ನಡ ತನಗಿರುವ ಅಧಿಕಾರದ ನೆಲೆಗಳನ್ನು ತನ್ನ [ಸೆಲ್ಫ್] ಮತ್ತು ಬೇರೆ [ಅದರ್] ಎಂಬ ವಿಂಗಡನೆಯ ಮೂಲಕ ತನ್ನ ನುಡಿ ಸಮುದಾಯವನ್ನು ನಿರೂಪಿಸುತ್ತದೆ.
ಈ ಅಧಿಕಾರವನ್ನು ಮರುಸಂಪಾದಿಸಲು ಗಡಿಗಳು ಮತ್ತು ಸಮುದಾಯಗಳ ಗಾತ್ರವನ್ನು ವ್ಯಾಖ್ಯಾನಿಸುತ್ತಲೇ ಇರುತ್ತದೆ. ಪರಿಣಾಮವಾಗಿ ಆಯಿಕಟ್ಟಿನ ಜಾಗಗಳನ್ನು [ಸ್ಟ್ರ್ಯಾಟಜಿಕ್ ಲೋಕೇಶನ್ಸ್] ಗೊತ್ತುಪಡಿಸಿಕೊಂಡು, ಅವುಗಳನ್ನೇ ಕನ್ನಡದ ಗುರುತುಗಳನ್ನಾಗಿ ರೂಪಿಸಲಾಗುತ್ತದೆ. ಆಯಾ ನುಡಿ ಸಮುದಾಯದೊಳಗಿರುವ ಕೆಲವು ಪ್ರಬಲ ಸಮೂಹಗಳು ಕನ್ನಡದ ನೈತಿಕತೆಯ ಸವಾಲುಗಳನ್ನು ಹುಟ್ಟುಹಾಕುತ್ತವೆ. ಕಾರಣವೇನೆಂದರೆ ಇಂತಹ ನಿಲುವುಗಳ ಮೂಲಕ ಕನ್ನಡದ ಬಗೆಗಿನ ತಮ್ಮ ಹುಸಿ ಅಭಿಮಾನವನ್ನು ಗಟ್ಟಿಗೊಳಿಸುವ ಹುನ್ನಾವಾಗಿರುತ್ತದೆ.
ಹಾಗಾಗಿ ಈ ಸವಾಲುಗಳನ್ನು ಹೊರ ಮತ್ತು ಒಳ ನುಡಿಗುಂಪುಗಳಿಂದ ನೈತಿಕ ಅನುಕಂಪ [ಮಾರಲ್ ಸಿಂಪಥಿ]ವನ್ನು ಪ್ರಚುರಪಡಿಸುವ ಮೂಲಕ ತಮ್ಮೀ ಹುನ್ನಾರವನ್ನು ಮುಂಚೂಣೆಗೆ ತರುತ್ತವೆ. ಇಂತಹ ಹುನ್ನಾರದ ತುಡಿತವೇನೆಂದರೆ, ನುಡಿಯೊಂದಕ್ಕೆ ಹುಸಿಮನ್ನಣೆಯನ್ನು ರೂಪಿಸುವುದಾಗಿರುತ್ತದೆ. ಇದನ್ನು ಸಾಕಾರಗೊಳಿಸಲು ಮಾನವ ಹಕ್ಕಿನ ಪ್ರಶ್ನೆಯನ್ನು ಮುಂದಿಡಲಾಗುತ್ತದೆ. ಈ ಮಾನವ ಹಕ್ಕುಗಳ ಸವಾಲು ಇಲ್ಲಿ ಎದುರಾಗುವುದು ಬದುಕಿನ ಆಶೋತ್ತರಗಳನ್ನು ಈಡೇರಿಸುವ ಇರಾದೆಯಿಂದಲ್ಲ. ಬದಲಾಗಿ ಹುಸಿಕನ್ನಡತನದ ಸ್ಥಿತಿಯನ್ನು ಎಚ್ಚರಿಸುವ ನೆಪ ಮಾತ್ರವಾಗಿರುತ್ತದೆ.
ಈ ಹಕ್ಕುಗಳ ಸ್ವರೂಪವನ್ನು ಮನಗಾಣುವ ಯಾವುದೇ ಉದ್ದೇಶ ಇಲ್ಲವೇ ಗುರಿಯನ್ನೂ ಇಲ್ಲಿ ಕಾಣಲು ಸಾಧ್ಯವಿಲ್ಲ. ಅಂದರೆ ಹಕ್ಕುವೆಂಬುದು ನಮ್ಮೊಳಗೆಯೇ ಅಂತರ್ಗತ [ಇನ್ಹೆರೆಂಟ್ ರೈಟ್ಸ್]ವಾಗಿದೋ? ಇಲ್ಲವೇ ಅದನ್ನು ಹೊರಗಿನ ಮೂಲಗಳಿಂದ ಪಡೆಯ [ಅರ್ನೆಡ್ ರೈಟ್ಸ್]ಬಹುದಾಗಿದೋ? ಎಂಬುದು ಕೂಡ ನುಡಿ ಬಗೆಗಿನ ತೀರ್ಮಾನಗಳಲ್ಲಿ ಗೊಂದಲವನ್ನುಂಟು ಮಾಡುತ್ತದೆ.
ಹಾಗಾಗಿ ಕನ್ನಡ ನುಡಿ ಕುರಿತಾದ ಯಾವುದೇ ನಿಲುವು ರಾಜಕೀಯೇತರವಾದದ್ದಲ್ಲ. ಆದ್ದರಿಂದ ಕುವೆಂಪು ಅವರ ನಿಲುವುಗಳು ಇಂತಹ ರಾಜಕೀಯ ಪ್ರೇರಿತವಾದ ನಂಬಿಕೆಗಳನ್ನು ಹುಸಿಗೊಳಿಸಿ, ದಿಟ ಕನ್ನಡತನವನ್ನು ನೆಲೆಗೊಳಿಸುವ ಕಾರಣ ಕನ್ನಡವೇ ಸತ್ಯ ಮತ್ತು ಕನ್ನಡವೇ ನಿತ್ಯವೆಂಬ ಮೂಲತತ್ವವನ್ನು ಇವರು ಹುಟ್ಟುಹಾಕಿರುತ್ತಾರೆ.
ಸಾಮಾಜಿಕ ಒಡಕಿನ ಬಗೆಗಳು
ಸಮೂಹಗಳ ಬದುಕಿನ ನಂಟಿನ ನೆಲೆಗಳನ್ನು ಹಾಗೂ ನಂಬಿಕೆಯ ನಿಲುವುಗಳನ್ನು ಗಟ್ಟಿಗೊಳಿಸುವ ಬದಲಾಗಿ, ಅವುಗಳನ್ನು ಹುಸಿಗೊಳಿಸುವ ಬಗೆಯಾಗಿ ಪದವೊಂದು ಅಂತಸ್ಥಗೊಂಡರೆ, ಅದರಿಂದ ಸಾಮಾಜಿಕ ಒಡಕು ಇನ್ನಷ್ಟು ಬಿಗಡಾಯಿಸುತ್ತದೆ ಎಂಬುದನ್ನು ಈ ಮೇಲಿನ ಚರ್ಚೆಗಳು ತಿಳಿಸುತ್ತವೆ. ಕನ್ನಡ ಜನಪರ ನಂಬಿಕೆಯ ಲೋಕದೊಳಗೆ ಸತ್ಯ ಮತ್ತು ನಿತ್ಯ ಪದಗಳು ನೆಲೆ ಪಡೆಯಲಿಲ್ಲ.
ಹೊಸಗಾಲದ ಕನ್ನಡವನ್ನು ಮುನ್ನೆಡೆಸುವ ಮುಂದಾಳುಗಳು ಕನ್ನಡದ್ದೇ ಜನಪರ ನಂಬಿಕೆಯ ಲೋಕವನ್ನು ಬೆಳೆಸುವ ಇಲ್ಲವೇ ಈಗಾಗಲೇ ನೆಲೆನಿಂತ ಕನ್ನಡೇತರ ಪರಂಪರೆಗೆ ಪರ್ಯಾಯ ಪರಂಪರೆಯೊಂದನ್ನು ಕಟ್ಟುವ ನಿಟ್ಟಿನಲ್ಲಿ ಇವರು ನಿಗಾವಹಿಸಲಿಲ್ಲ. ಹಾಗಾಗಿ ಕನ್ನಡ ನುಡಿಯ ಸಾಮಾಜಿಕ ನೆಲೆಗಳನ್ನು ಅನ್ಯಗೊಳಿಸುವ ತುಡಿತವೇ ಇಲ್ಲಿ ಮೇಲುಗೈ ಪಡೆದಿರುವುದನ್ನು ನೋಡಬಹುದು.
ಕುವೆಂಪು ಅವರು ಪರನುಡಿಗಳಿಂದ ಪದಗಳನ್ನು ಕಡ ತಂದರೂ, ಕನ್ನಡ ನುಡಿ ಸಮುದಾಯಗಳ ಏಳ್ಗೆಗೆ ಬೇಕಾಗುವ ದಾರಿಗಳನ್ನು ಕಟ್ಟುವ ಬಗೆಯಾಗಿರುತ್ತದೆ. ಕನ್ನಡವೇ ಸತ್ಯ ಮತ್ತು ಕನ್ನಡವೇ ನಿತ್ಯ ಎಂಬುದು ಕೇವಲ ಮಂತ್ರಪಠಣವಾಗದೇ, ಬದುಕಿನ ನಂಬಿಕೆಯಾಗಬೇಕಿದೆ. ಕನ್ನಡದ ಮುಂದಾಳುತನವನ್ನು ವಹಿಸುವವರು ಕುವೆಂಪು ಅವರು ರೂಪಿಸಿದ ನುಡಿತತ್ವಗಳನ್ನು ಆಚರಣೆಗೆ ತರುವ ಅನಿವಾರ್ಯವನ್ನು ಅರಿಯಬೇಕಿದೆ. ಕನ್ನಡತನ ಎನ್ನುವುದು ಅದು ಬರೀ ಹಕ್ಕಲ್ಲ, ಮಂತ್ರವು ಅಲ್ಲ, ತಂತ್ರವೂ ಅಲ್ಲ. ಅದು ಬದುಕು ಹಾಗೂ ಬದುಕಿಗೆ ಬೇಕಾಗುವ ಅಪ್ಪಟ ನಂಬಿಕೆಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ4 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ5 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ2 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ12 hours agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ


