Connect with us

ನೆಲದನಿ

ನೆಲಮೂಲ ಸಂಸ್ಕೃತಿಯ ಜಾಗೃತ ದನಿಯಾದ ವೈಚಾರಿಕ ಚಿಂತಕ ‘ಡಾ.ಕೆ.ಎಸ್.ಭಗವಾನ್’

Published

on

  • ಡಾ.ಕೆ.ಎ.ಓಬಳೇಶ್

ಭಾರತದ ನೆಲದಲ್ಲಿ ಸಾಮಾಜಿಕ ಅಸಮಾನತೆಯನ್ನು ಪ್ರತಿಭಟಿಸಿ, ಸಮಾನತೆಯನ್ನು ಪ್ರತಿಪಾದಿಸುವ ನೆಲೆಯಲ್ಲಿ ಹಲವಾರು ದಾರ್ಶನಿಕರು ಜೀವತಳೆದಿದ್ದಾರೆ. ಇಂತಹ ದಾರ್ಶನಿಕರಲ್ಲಿ ಬುದ್ಧ, ಬಸವ, ಕನಕ, ಫುಲೆ, ವಿವೇಕಾನಂದ, ಅಂಬೇಡ್ಕರ್, ಪೆರಿಯಾರ್ ಹಾಗೂ ಮುಂದಾದವರು ಪ್ರಮುಖರಾಗಿದ್ದಾರೆ. ಇವರೆಲ್ಲರೂ ಭಾರತದ ನೆಲದಲ್ಲಿ ಸನಾತನವಾದಿಗಳು ರೂಪಿಸಿದ ಜಾತಿ, ಲಿಂಗ ತಾರತಮ್ಯದ ಕಟ್ಟುಪಾಡುಗಳನ್ನು ಮಾನವೀಯ ನೆಲೆಯಲ್ಲಿ ಮೀರುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಇಂತಹ ದಾರ್ಶನಿಕ ಚಿಂತನಧಾರೆಗಳನ್ನು ಸಮಕಾಲೀನ ತುರ್ತಿಗೆ ಪೂರಕವಾಗಿ ಅನುಸಂಧಾಗೊಳಿಸುವ ಮೂಲಕ ಸಮಸಮಾಜದ ಕನಸೊತ್ತ ಹಲವಾರು ವಿಚಾರವಾದಿಗಳು ನಮ್ಮ ಮುಂದಿದ್ದಾರೆ. ಇಂತಹ ವಿಚಾರವಾದಿಗಳಲ್ಲಿ ಡಾ.ಕೆ.ಎಸ್.ಭಗವಾನರು ಪ್ರಮುಖರಾಗಿದ್ದಾರೆ. ಸಾವಿರಾರು ವರ್ಷಗಳಿಂದಲೂ ಸನತನವಾದಿಗಳು ಧರ್ಮ ಮತ್ತು ದೇವರ ಹೆಸರಿನಲ್ಲಿ ಈ ನೆಲದ ಮೂಲವಾಸಿಗಳನ್ನು ಗುಲಾಮರಾಗಿಸಿಕೊಂಡ ಬಗೆಯನ್ನು ತನ್ನ ವೈಚಾರಿಕ ನಿಲುವುಗಳ ಮೂಲಕ, ಶೋಷಿತ ಸಮುದಾಯಗಳಿಗೆ ಜಾಗೃತಿ ಮೂಡಿಸುತ್ತ ಬಂದಿರುವ ಡಾ.ಕೆ.ಎಸ್.ಭಗವಾನರ ಜೀವನ ಹಾಗೂ ಚಿಂತನೆಗಳ ಮೇಲೆ ಸಂಕ್ಷಿಪ್ತವಾಗಿ ಬೆಳಕು ಚೆಲ್ಲುವುದು ಪ್ರಸ್ತುತ ಲೇಖನದ ಆಶಯವಾಗಿದೆ.

ಶ್ರೀಯುತರು ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್ಲಳ್ಳಿ ಗ್ರಾಮದಲ್ಲಿ ಶ್ರೀಯುತ ಸಣ್ಣೆಗೌಡ ಕೆಂಪಾಮ್ಮ ದಂಪತಿಗಳ ಮಗನಾಗಿ ದಿನಾಂಕ 14 ಜುಲೈ 1945 ರಂದು ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕಲ್ಲಳ್ಳಿ, ಮಾಧ್ಯಮಿಕ ಶಿಕ್ಷಣವನ್ನು ಪಕ್ಕದ ಗ್ರಾಮವಾದ ಹರವಿ, ಪ್ರೌಢ ಶಿಕ್ಷಣ ಮತ್ತು ಪದವಿಪೂರ್ವ ಶಿಕ್ಷಣವನ್ನು ಹಾಸನ ಜಿಲ್ಲೆಯ ಹರಕಲಗೋಡು, ಪದವಿ ಶಿಕ್ಷಣವನ್ನು ಮೈಸೂರಿನ ಮಹಾರಾಜ ಕಾಲೇಜು ಹಾಗೂ ಆಂಗ್ಲ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪೂರೈಸಿದರು.

ನಂತರದಲ್ಲಿ ಕೊಡಗು ಹಾಗೂ ಮೈಸೂರಿನಲ್ಲಿ ಕೆಲವು ವರ್ಷಗಳ ಕಾಲ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿ, 1973 ರಿಂದ 2005ರವರೆಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರವಾಚಕರಾಗಿ, ಪ್ರಾಧ್ಯಾಪಕರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಕೆ.ಎಸ್.ಭಗವಾನರು ತಮ್ಮ ಹೈಸ್ಕೂಲ್ ಹಂತದಲ್ಲಿಯೇ ಸಾಹಿತ್ಯದ ಆಸಕ್ತಿಯನ್ನು ಮೈಗೂಡಿಸಿಕೊಂಡವರು.

ಇವರ ಸಾಹಿತ್ಯಾಸಕ್ತಿಗೆ ಪ್ರೇರಣೆಯಾಗಿದ್ದು ಕುವೆಂಪು ಅವರ ವ್ಯಕ್ತಿತ್ವ. ಭಗವಾನರು ಒಮ್ಮೆ ತಮ್ಮ ಸ್ನೇಹಿತನ ಬಳ್ಳಿಯಿದ್ದ ಕೃತಿಯೊಂದರಲ್ಲಿನ ಪ್ರಬಂಧದಲ್ಲಿ ಕುವೆಂಪು ಅವರು ತಮ್ಮ ಹೈಸ್ಕೂಲ್ ಹಂತದ ವೇಳೆಗೆ ಕವಿತೆಗಳನ್ನು ರಚಿಸಿ, ಕವನ ಸಂಕಲನವನ್ನು ಪ್ರಕಟಿಸಿರುವ ಲೇಖನವನ್ನು ಓದಿ ನಾನು ಕೂಡ ಹೈಸ್ಕೂಲ್ ವಿದ್ಯಾರ್ಥಿ. ಆದ ಕಾರಣ ನಾನು ಯಾಕೆ ಬರೆಯಬಾರದು ಎಂದು ಕವಿತೆ ಬರೆಯುವ ಗೀಳಿಗೆ ಒಳಗಾಗಿದ್ದರು.

ಆಗ ಕುವೆಂಪು ಯಾರು ಎಂಬ ವಿಚಾರವು ಭಗವಾನರಿಗೆ ತಿಳಿದಿರಲಿಲ್ಲ. ಈ ಸಂದರ್ಭದಲ್ಲಿ ಕಾವ್ಯ ರಚನೆಗೆ ಮುಂದಾದ ಭಗವಾನರಿಗೆ ಹಲವಾರು ತೊಡಕುಗಳು ಎದುರಾದವು. ಆಗ ಇವರು ತಿಳಿದುಕೊಂಡ ವಿಚಾರವೆಂದರೆ ಕಾವ್ಯ ರಚನೆ ಮಾಡಬೇಕಾದರೆ ಸಾಕಷ್ಟು ಓದು ಮತ್ತು ಜ್ಞಾನದ ಅಗತ್ಯವಿದೆ ಎಂಬುದು.

ಹೀಗಾಗಿ ಸಾಕಷ್ಟು ಕೃತಿಗಳನ್ನು ಓದುವ ಮೂಲಕ ಕಾವ್ಯ ರಚನೆ ಮಾಡುವ ಹವ್ಯಾಸವನ್ನು ರೂಢಿಸಿಕೊಂಡು ಹೈಸ್ಕೂಲ್ ಹಾಗೂ ಪದವಿಪೂರ್ವ ಹಂತದಲ್ಲಿಯೇ ಶಾಲೆಯ ಹಲವಾರು ಸಂಚಿಕೆಗಳಲ್ಲಿ ಇವರು ತಮ್ಮ ಕವಿತೆಗಳನ್ನು ಪ್ರಕಟಿಸಿ ಹಲವರ ಮೆಚ್ಚುಗೆಗೂ ಪಾತ್ರರಾಗಿದ್ದರು.

ಭಗವಾನರು ಪದವಿ ಶಿಕ್ಷಣಕ್ಕೆ ಪ್ರವೇಶ ಪಡೆದ ತರುವಾಯದಲ್ಲಿ ಇಂಗ್ಲೀಷ್ ಕಲಿಯುವ ಆಸಕ್ತಿಯನ್ನು ಮೈಗೂಡಿಸಿಕೊಂಡು ಕವಿತೆಯ ಬಗೆಗಿನ ಗೀಳನ್ನು ದೂರ ಮಾಡಿಕೊಂಡರು. ನಂತರ ಆಂಗ್ಲ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ತರುವಾಯದಲ್ಲಿ ಸಾಹಿತ್ಯದಲ್ಲಿ ಆಸಕ್ತಿಯನ್ನು ಮೈಗೂಡಿಸಿಕೊಂಡು ತಮ್ಮ ಬರವಣಿಗೆಯನ್ನು ಮುಂದುವರೆಸಿದರು.

ಆದರೆ ಅದು ಅಷ್ಟೊಂದು ಗಟ್ಟಿತನ ಹಾಗೂ ಮೌಲ್ಯಯುತವಾಗಿರಲಿಲ್ಲ. ಈ ಹಂತದಲ್ಲಿ ತಾವು ಗಳಿಸಿದ ಆಂಗ್ಲಭಾಷೆಯ ಪಾಂಡಿತ್ಯದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಲಿಯೋ ಟಾಲ್‍ಸ್ಟಾಯ್ ಹಾಗೂ ಮುಂತಾದವರ ಕತೆಗಳನ್ನು ಕನ್ನಡಕ್ಕೆ ಅನುವಾದಿಸುವ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡರು.

ಇದಾದ ನಂತರ ಶೇಕ್ಸ್‍ಪಿಯರ್‍ನ ನಾಟಕಗಳನ್ನು ಕನ್ನಡಕ್ಕೆ ಅನುವಾದಿಸುವ ಕಾರ್ಯಕ್ಕೆ ಮುಂದಾದರು. ಆಂಗ್ಲ ನಾಟಕಗಳಲ್ಲಿನ ರಸ ಸನ್ನಿವೇಶಗಳನ್ನು ಕನ್ನಡಕ್ಕೆ ಕಟ್ಟಿಕೊಡುವಲ್ಲಿ ತಮಗೆ ಎದುರಾದ ಗೊಂದಲಗಳನ್ನು ನಿವಾರಿಸಿಕೊಳ್ಳಲು ತಮ್ಮ ಶ್ರೀಮತಿಯವರ ಮುಂದೆ ಅನುವಾದಿತ ನಾಟಕಗಳನ್ನು ಓದಿ, ಅವರು ಅದಕ್ಕೆ ಪ್ರತಿಕ್ರಿಯಿಸಿದ ತರುವಾಯದಲ್ಲಿ ಇದು ಕನ್ನಡಿಗರ ಮನೆಯಂಗಳನ್ನು ಪ್ರವೇಶಿಸುತ್ತದೆ ಎಂಬ ಬಲವಾದ ನಂಬಿಕೆಯೊಂದಿಗೆ ಸುಮಾರು 11 ನಾಟಕಗಳನ್ನು ಅನುವಾದಿಸುವ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ಕೀರ್ತಿ ಭಗವಾನರಿಗೆ ಸಲ್ಲುತ್ತದೆ.

ಶ್ರೀಯುತರ ಆಂಗ್ಲ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಅಮೇರಿಕಾದ ‘ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯ’ವು ಡಿ.ಲಿಟ್ (ಡಾಕ್ಟರ್ ಆಫ್ ಲಿಟರೇಚರ್) ಪದವಿಯನ್ನು ನೀಡಿ ಗೌರವಿಸಿದೆ.
ಶ್ರೀಯುತ ಕೆ.ಎಸ್.ಭಗವಾನ್ ಅವರು ತಮ್ಮಲ್ಲಿ ಬಾಲ್ಯದಿಂದಲೂ ಅಂತರ್ಗತವಾಗಿ ನೆಲೆಯೂರಿದ್ದ ಸಾಹಿತ್ಯದ ಬಗ್ಗೆ ವಿಶೇಷವಾದ ಕಾಳಜಿಯನ್ನು ಮೈಗೂಡಿಸಿಕೊಂಡವರು.

ಸಾಹಿತ್ಯದ ಮೂಲಕವಾಗಿ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಹಂಬಲ ಹೊಂದಿದ್ದರು. ಹೀಗಾಗಿ ವೈಚಾರಿಕ ಚಿಂತನೆಯುಳ್ಳ ವಿಮರ್ಶಾ ಸಾಹಿತ್ಯಕ್ಕೆ ಮುಂದಾದ ಸಂದರ್ಭದಲ್ಲಿ ಹಲವಾರು ತೊಡಕುಗಳು ಇವರ ಮುಂದೆ ಸೃಷ್ಟಿಯಾದವು. ಇಂತಹ ಸಂದರ್ಭದಲ್ಲಿ ಕುವೆಂಪು ಅವರ ಭಾಷಣದ ಪ್ರತಿರೂಪವಾಗಿ ಮೂಡಿಬಂದ ಲೇಖನದಿಂದ ಪ್ರಭಾವಿತರಾದವರು.

ಕುವೆಂಪು ಅವರು ಮಹಾರಾಜ ಕಾಲೇಜಿನ ತಮ್ಮ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಆ ಲೇಖನದಲ್ಲಿ ‘ತತ್ವಶಾಸ್ತ್ರ, ಮನಶಾಸ್ತ್ರ, ಇತಿಹಾಸ ಹಾಗೂ ಇತರೆ ಮಾನವೀಕ ಶಾಸ್ತ್ರಗಳನ್ನು ಆಳವಾಗಿ ಅಧ್ಯಯನ ಮಾಡದೆ ವಿಮರ್ಶೆ ಮಾಡುವ ಬರಹವೆಲ್ಲ ಬುರುಬುರು ನೊರೆ’ ಎಂಬುದಾಗಿ ಉಲ್ಲೇಖಿಸುತ್ತಾರೆ. ಈ ಮಾತಿನಿಂದ ಪ್ರೇರಿತರಾದ ಭಗವಾನರು ಸ್ವಲ್ಪ ದಿನಗಳ ಕಾಲ ಸಾಹಿತ್ಯದ ಬರವಣಿಗೆಯನ್ನು ನಿಲ್ಲಿಸಿ ತತ್ವಶಾಸ್ತ್ರ, ಮಾನವಶಾಸ್ತ್ರ, ಧರ್ಮ, ವಿಜ್ಞಾನ, ಇತಿಹಾಸ ಮುಂತಾದ ಪ್ರಕಾರಗಳನ್ನು ಅಧ್ಯಯನಕ್ಕೆ ಒಳಪಡಿಸುತ್ತಾರೆ.

ಹಲವಾರು ವಿಷಯಗಳಲ್ಲಿ ಪಾಂಡಿತ್ಯವನ್ನು ಗಳಿಸಿದ ತರುವಾಯದಲ್ಲಿ ವೈಚಾರಿಕ ಸಾಹಿತ್ಯದ ಮೂಲಕ ಸಾಮಾಜಿಕ ಕಟ್ಟುಪಾಡುಗಳಲ್ಲಿ ಅಂತರ್ಗತವಾಗಿರುವ ಮೂಲಭೂತವಾದಿ ಧೋರಣೆಗಳನ್ನು ಎಳೆಎಳೆಯಾಗಿ ಬಿಡಿಸಿ ಜನತೆಯಲ್ಲಿ ಜಾಗೃತ ಪ್ರಜ್ಞೆಯನ್ನು ಮೂಡಿಸುವ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ.
ಶ್ರೀಯುತ ಕೆ.ಎಸ್.ಭಗವಾನರು ಈ ನೆಲದ ಶೋಷಿತ ಸಮುದಾಯಗಳ ದನಿಯಾಗಿ ನಿಂತು ಸನಾತನವಾದಿಗಳು ಧರ್ಮದ ಹೆಸರಿನಲ್ಲಿ ರೂಢಿಸಿಕೊಂಡು ಬಂದ ತತ್ವ ಸಿದ್ಧಾಂತಗಳನ್ನು ಪ್ರತಿರೋಧಿಸಿದ್ದಾರೆ.

ಭಾರತದ ನೆಲದಲ್ಲಿ ಸಮಾನತೆಯ ಹರಿಕಾರನಾಗಿ ಜನ್ಮತಳೆದ ಬುದ್ಧನ ತತ್ವ ಸಿದ್ಧಾಂತಗಳನ್ನು ಸಮಕಾಲೀನ ತುರ್ತಿಗೆ ಪೂರಕವಾದ ನೆಲೆಯಲ್ಲಿ ಅನುಸಂಧಾನಗೊಳಿಸುವ ಮೂಲಕ, ಸಾಮಾನ್ಯ ಜನರ ಬದುಕಿನ ಭಾಗವಾಗಿ ಬೆರೆತು ಹೋಗಿರುವ ಬೌದ್ಧ ಚಿಂತನೆಗಳು ಹಾಗೂ ಬೌದ್ಧ ಕುರುಹುಗಳನ್ನು ಅನಾವರಣಗೊಳಿಸುತ್ತ ಬಂದಿದ್ದಾರೆ.

ಭಾರತದ ಮೂಲನಿವಾಸಿಗಳ ಸ್ವಾಭಿಮಾನದ ಪ್ರತೀಕವಾದ ಬುದ್ಧನ ಧಮ್ಮ ಹಾಗೂ ಬೌದ್ಧ ಅನುಯಾಯಿಗಳು ಸನಾತನವಾದಿಗಳ ಕ್ರೌರ್ಯಕ್ಕೆ ಗುರಿಯಾದ ಬಗೆಯನ್ನು ತಮ್ಮ ‘ಶಂಕರಾಚಾರ್ಯ ಮತ್ತು ಪ್ರತಿಗಾಮಿತನ’ ಎಂಬ ಕೃತಿಯಲ್ಲಿ ಸವಿವರವಾಗಿ ಕಟ್ಟಿಕೊಟ್ಟಿದ್ದಾರೆ. ಹಾಗೆಯೇ ಭಾರತೀಯರಿಗೆ ಬುದ್ಧ ಆದರ್ಶನಾಗಬೇಕೆ ಹೋರತು ರಾಮನಲ್ಲ ಎಂಬುದನ್ನು ಧಾರ್ಮಿಕ ಪಠ್ಯಗಳ ಹಿನ್ನೆಲೆಯಲ್ಲಿ ಸಾಬೀತುಪಡಿಸುತ್ತ ಬಂದಿದ್ದಾರೆ.

ಇದನ್ನು ಇವರ ‘ರಾಮ ಮಂದಿರ ಯಾಕೆ ಬೇಡ?’ ಎಂಬ ಕೃತಿಯಲ್ಲಿ ಸಮಗ್ರವಾಗಿ ಕಾಣಬಹುದಾಗಿದೆ. ಹಾಗೆಯೇ ಸನಾತನವಾದಿಗಳು ತಮ್ಮ ಅಸ್ತಿತ್ವದ ಉಳಿವಿಗಾಗಿ ಈ ನೆಲದ ಶೂದ್ರಾತಿ ಶೂದ್ರ ವರ್ಗವನ್ನು ಶೋಷಣೆಗೆ ಒಳಪಡಿಸಿ, ಈ ಸಮುದಾಯಗಳ ಅಸ್ಮಿತೆಯ ಭಾಗವಾದ ಬುದ್ಧನ ಧಮ್ಮವನ್ನು ಭಾರತದ ನೆಲದಿಂದ ಕಣ್ಮರೆಯಾಗಿಸಿದ ಬಗೆಯನ್ನು ‘ಹಿಂದೂ ಸಾಮ್ರಾಜ್ಯಶಾಹಿಯ ಇತಿಹಾಸ’ ಎಂಬ ಕೃತಿಯ ಮೂಲಕ ಶೋಷಿತ ಸಮುದಾಯಗಳ ಚಾರಿತ್ರಿಕ ಅಸ್ಮಿತೆಯನ್ನು ತೆರೆದಿಟ್ಟಿದ್ದಾರೆ.

ಶ್ರೀಯುತ ಕೆ.ಎಸ್.ಭಗವಾನರು ಬುದ್ಧ, ಬಸವ, ವಿವೇಕಾನಂದ, ಅಂಬೇಡ್ಕರ್, ಕುವೆಂಪು ಹಾಗೂ ಪಾಶ್ಚಿಮಾತ್ಯ ದಾರ್ಶನಿಕರಾದ ಬರ್ಟನ್ ರೆಸಲ್, ಮಿಲ್ಲೆಟ್, ಡಾಂಟೆ, ಶೇಕ್ಸ್‍ಪಿಯರ್ ಮುಂತಾದವರ ಚಿಂತನಧಾರೆಗಳಿಂದ ಪ್ರಭಾವಿತರಾದವರು. ಇವರ ತತ್ವ ಚಿಂತನೆಗಳಲ್ಲಿನ ಮಾನವೀಯ ಅಂಶಗಳನ್ನು ಮೈಗೂಡಿಸಿಕೊಂಡು ಸದಾ ಜೀವಪರವಾದ ಚಿಂತನೆಗಳನ್ನು ಪ್ರತಿಪಾದಿಸುತ್ತ ಬಂದಿದ್ದಾರೆ.

ಸುಮಾರು ನಾಲ್ಕು ದಶಕಗಳಿಂದಲೂ ದಲಿತಪರ, ರೈತಪರ, ಮಹಿಳಾಪರ, ಭಾಷಾಪರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತಮ್ಮ ವೈಚಾರಿಕ ಚಿಂತನೆಗಳ ಮೂಲಕ ಸಮಸಮಾಜದ ಕನಸು ಕಾಣುತ್ತ ಬಂದಿರುವ ಕೆ.ಎಸ್.ಭಗವಾನರು ಈ ನೆಲದ ಶೋಷಿತರ ದನಿಯಾಗಿ ನಿಂತವರು. ಶ್ರೀಯುತರ ವೈಚಾರಿಕ ಚಿಂತನೆಗಳಿಂದ ಭಯಗ್ರಸ್ತರಾದ ಸನಾತನವಾದಿಗಳು ತಮ್ಮ ಅಸ್ತಿತ್ವದ ಉಳಿವಿಗಾಗಿ ಇವರ ಮೇಲೆ ಮಾರಾಣಾಂತಿಕ ಹಲ್ಲೆಯಂತಹ ಅಮಾನವೀಯ ಕೃತ್ಯಕ್ಕೂ ಮುಂದಾಗಿದ್ದಾರೆ. ತಮ್ಮ ಜೀವದ ಹಂಗನ್ನು ತೊರೆದ ಭಗವಾನರು ಸತ್ಯದ ಪರವಾಗಿ ನಿರಂತರವಾಗಿ ಮುನ್ನೆಡೆಯುತ್ತಿದ್ದಾರೆ.

ಹನ್ನೊಂದು ಆಂಗ್ಲ ನಾಟಕಗಳನ್ನು ಕನ್ನಡಕ್ಕೆ ಅನುವಾದಿಸುವ ಮೂಲಕ ‘ಅನನ್ಯತೆ’, ‘ಆಂತರ್ಯ’, ‘ಕುವೆಂಪು’, ‘ಬದಲಾವಣೆ’ ಹಾಗೂ ‘ಕಣಿಗಲೆ’ ಎಂಬ ವಿಮರ್ಶಾ ಕೃತಿಗಳನ್ನು, ವಿಚಾರ ಸಾಹಿತ್ಯಕ್ಕೆ ಸಂಬಂಧಿಸಿದಂತೆ ‘ಭಾಷೆ ಮತ್ತು ಸಂಸ್ಕೃತಿ, ‘ಗಾಂಧಿಯನ್ನು ಗೂಡ್ಸೆ ಏಕೆ ಕೊಂದ?’, ‘ಬುದ್ಧ ಮತ್ತು ಕಾರ್ಲ್‍ಮಾಕ್ರ್ಸ್’, ‘ಶಂಕರಾಚಾರ್ಯ ಮತ್ತು ಪ್ರತಿಗಾಮಿತನ’, ಹಾಗೆಯೇ ಚರಿತ್ರೆಗೆ ಪೂರಕವಾಗಿ ‘ಇತಿಹಾಸ ಚಕ್ರ’, ‘ಇತಿಹಾಸದ ಪಾಠಗಳು’, ಹಾಗೂ ‘ಹಿಂದೂ ಸಾಮ್ರಾಜ್ಯಶಾಹಿಯ ಇತಿಹಾಸ’ ಮತ್ತು ಮಕ್ಕಳ ಸಾಹಿತ್ಯ, ಸಂಪಾದನೆ, ಅನುವಾದ ಕ್ಷೇತ್ರದಲ್ಲಿ ಹಲವಾರು ಕೃತಿಗಳನ್ನು ಕನ್ನಡ ಸಾಹಿತ್ಯ ವಲಯಕ್ಕೆ ಸಮರ್ಪಿಸಿದ್ದಾರೆ.

ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಸಾಹಿತ್ಯದ ಮೂಲಕ ತನ್ನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವ್ಯಕ್ತಪಡಿಸುವ ಎದೆಗಾರಿಕೆಯನ್ನು ಹೊಂದಿರುವ ಶ್ರೀಯುತರಿಗೆ ಕರ್ನಾಟಕ ಸರ್ಕಾರವು ‘ರಾಜ್ಯೋತ್ಸವ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ಇದರೊಂದಿಗೆ ಹಲವಾರು ಸಂಘ ಸಂಸ್ಥೆಗಳಿಂದ ವಿಶೇಷವಾದ ಗೌರವ ಮತ್ತು ಪುರಸ್ಕಾರಕ್ಕೆ ಭಾಜನರಾದ ಶ್ರೀಯುತರಿಗೆ ಸುದ್ಧಿದಿನ ಪತ್ರಿಕಾ ಬಳಗದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.

(-ಡಾ.ಕೆ.ಎ.ಓಬಳೇಶ್
9591420216)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending