ರಾಜಕೀಯ
ದಾದಾಸಾಹೇಬ್ ಕಾನ್ಷೀರಾಮ್ : ಕೆಲವು ವಿಚಾರಗಳು | ಅಂಬೇಡ್ಕರ್ ಜಯಂತಿಗೆ ರಜೆ ಕ್ಯಾನ್ಸಲ್ ಮಾಡಿದ್ದಕ್ಕೆ ಬಿಎಸ್ಪಿ ಹುಟ್ಟಿಕೊಂಡಿತು..!
- ಆರ್ ಹೆಚ್ ಬಿ
ಅಂಬೇಡ್ಕರ್ ಜಯಂತಿ ದಲಿತರಿಗೆ ಅದೆಷ್ಟು ಮಹತ್ವದ್ದು? ಬಹುಶಃ ಅದು ವರ್ಣಿಸಲಸದಳ. ಅದಕ್ಕೆ ರಜೆ ನೀಡದ್ದಕ್ಕೆ, ನೀಡಿದ್ದ ರಜೆಯನ್ನು ರದ್ದುಮಾಡಿದ್ದಕ್ಕೆ ಒಂದು ಬೃಹತ್ ರಾಜಕೀಯ ಪಕ್ಷವೇ ಹುಟ್ಟಿಕೊಂಡಿತೆಂದರೆ…! ಹೌದು, ಇದು ಸತ್ಯ. ಇತಿಹಾಸಕಾರರು ಗುರುತಿಸಿರುವಂತೆ 1964ರಲ್ಲಿ ಕಾನ್ಷೀರಾಮ್ ರವರು ಅಧಿಕಾರಿಯಾಗಿದ್ದ DRDO ಕಚೇರಿಯಲ್ಲಿ ಆ ವರ್ಷ ಇದ್ದಕ್ಕಿದ್ದಂತೆ ಅಂಬೇಡ್ಕರ್ ಜಯಂತಿ, ಬುದ್ಧ ಜಯಂತಿ ಮತ್ತು ವಾಲ್ಮೀಕಿ ಜಯಂತಿಗಳಿಗೆ ರಜೆ ಕ್ಯಾನ್ಸಲ್ ಮಾಡಲಾಗಿತ್ತು. ಅದರ ಬದಲು ಬೇರೆ ಹಿಂದೂ ಹಬ್ಬಗಳಿಗೆ ರಜೆ ನೀಡಲಾಗಿತ್ತು. ಇದರ ವಿರುದ್ಧ ಸಿಡಿದು ನಿಂತ ಕಾನ್ಷೀರಾಮ್ರವರು ‘ತಮ್ಮ ಕಚೇರಿಯಲ್ಲೇ ಅಂಬೇಡ್ಕರ್ ಜಯಂತಿ ರಜೆ ರದ್ದು ಮಾಡಿದರೆ?’ ಎಂದು ನೌಕರರ ಮುಂದಾಳತ್ವ ವಹಿಸಿ ದೊಡ್ಡ ಹೋರಾಟ ರೂಪಿಸಿದರು. ಪರಿಣಾಮ BAMCEF ನಂತಹ ಬೃಹತ್ ನೌಕರರ ಸಂಘಟನೆ, DS4 ನಂತಹ ಬೃಹತ್ ಹೋರಾಟದ ಹಾದಿ, ಬಿಎಸ್ಪಿಯಂತಹ ರಾಜಕೀಯ ಪಕ್ಷ ಹುಟ್ಟಿಕೊಂಡಿತು. ಈ ನಿಟ್ಟಿನಲ್ಲಿ 1964ರಲ್ಲಿ ಅಂಬೇಡ್ಕರ್ ಜಯಂತಿಗೆ ರಜೆ ರದ್ದುಗೊಳಿಸಿಲ್ಲದಿದ್ದರೆ ಕಾನ್ಷೀರಾಮ್ ರವರು ಮದುವೆಯಾಗಿ, ಡಿಆರ್ಡಿಒದಲ್ಲಿ ಓರ್ವ ಸಾಮಾನ್ಯ ಸಂಶೋಧಕನಾಗಿ ಸಾಮಾನ್ಯ ಜೀವನ ನಡೆಸುತ್ತ ಇದ್ದುಬಿಡುತ್ತಿದ್ದರು! ಆದರೆ ಅಂಬೇಡ್ಕರ್ ಜಯಂತಿಗೆ ರಜೆ ರದ್ದುಮಾಡಿದ್ದರಿಂದ ಕಾನ್ಷೀರಾಮ್ರೊಳಗೊಬ್ಬ ಹೋರಾಟಗಾರ, ಅಪ್ರತಿಮ ನಾಯಕ ಎದ್ದು ನಿಂತಿದ್ದ. So, that is the power of Ambedkar Jayanthi and power of Kanshiram!
ಪ್ರವಾದಿ ಮಾದರಿಯ ಹುರುಪು
ಕಾನ್ಷೀರಾಮ್ರವರು BAMCEF ಹೆಸರಿನಲ್ಲಿ ನೌಕರರನ್ನು ಸಂಘಟಿಸಿದ್ದು ಎಲ್ಲರಿಗೂ ತಿಳಿದಿದೆ. ತಮ್ಮ ಕನಸನ್ನು ನನಸುಗೊಳಿಸಲು ಸರ್ಕಾರಿ ನೌಕರರನ್ನು ಬಳಸಿಕೊಳ್ಳಬೇಕು ಎಂಬ ಐಡಿಯಾ ಸಾಹೇಬರಿಗೆ ಬಂದದ್ದು 1973ರಲ್ಲಿ. ಆದರೆ ಅದು ಸಾಕಾರಗೊಳ್ಳಲು ಸುಮಾರು ಐದು ವರ್ಷಗಳು ಬೇಕಾಯಿತು. ಈ ಸಂದರ್ಭದಲ್ಲಿ ಸಾಹೇಬರು ನೌಕರರನ್ನು ಸಂಘಟಿಸುವ ಪರಿ ಹೇಗಿತ್ತು? ದಾದಾಸಾಹೇಬರೇ ನೆನೆಪಿಸಿಕೊಳ್ಳುವಂತೆ “ಆಗಾಗ ನಾನು ಸರ್ಕಾರಿ ಕಚೇರಿಗಳಿಗೆ ಭೇಟಿಕೊಡಲು ಹೋದಾಗ ಜನ ನನ್ನನ್ನು ನೋಡಿ ಓ! ಹುಚ್ಚ ಬಂದ ಎಂದು ಓಡಿಹೋಗುತ್ತಿದ್ದರು!” (Views and Interviews of Kanshiram by N.Manohara Prasad, Pp.126) ಆದರೆ ದಾದಾಸಾಹೇಬರ ಪ್ರವಾದಿ ಮಾದರಿಯ ಹುರುಪು ಅವರ ಅನುಯಾಯಿಗಳನ್ನು ಅವರತ್ತ ಸೆಳೆಯಲು ಪ್ರಾರಂಭಿಸಿತು!
ನೌಕರರು ಮೆದುಳಿನ ಬ್ಯಾಂಕುಗಳು!
ಕಾನ್ಷೀರಾಮ್ ರವರು ನೌಕರರಲ್ಲಿ ತಪ್ಪಿತಸ್ಥ ಭಾವನೆಯನ್ನು ತುಂಬಿದರು. ತಾನೆಲ್ಲ ಪಡೆದೆ ತಾನು ಸಮಾಜಕ್ಕೆ ಏನು ಕೊಟ್ಟೆ? ಎಂಬ ಭಾವವದು. ನೌಕರರು ಬರೇ ಹಣಕಾಸು ನೀಡುವುದಷ್ಟೆ ಅಲ್ಲ, ಮುಖ್ಯವಾಗಿ ಕಾನ್ಷೀರಾಮ್ರವರು ನೌಕರರ talent(ಪ್ರತಿಭೆ)ಗಳನ್ನು ಬಳಸಿದರು. ಈ ಬಗ್ಗೆ ಸ್ವತಃ ಕಾನ್ಷೀರಾಮ್ರವರು ಒಂದೆಡೆ “we use them as brain banks” ಎನ್ನುತ್ತಾರೆ. ಅಂದರೆ “ನಾನು ಅವರನ್ನು ಮೆದುಳಿನ ಬ್ಯಾಂಕ್ ಥರ ಬಳಸಿದೆ” ಎಂದರ್ಥ! ಇದಕ್ಕೆ ಅವರು ಕೊಡುವ ವಿವರಣೆ “ಅವರು (ನೌಕರರು) ದೇಶಾದ್ಯಂತ ಹರಡಿದ್ದಾರೆ. ಅವರ ಹಣಕಾಸು ಶಕ್ತಿ ಮತ್ತು ಬುಧ್ಧಿಶಕ್ತಿ ಎರಡೂ ಬೆಲೆಕಟ್ಟಲಾಗದ್ದು”. ಹೌದು, ಕಾನ್ಷೀರಾಮ್ರವರು ಹೇಳಿದ ಮೆದುಳಿನ ಬ್ಯಾಂಕ್; ಶೋಷಿತ ಸಮುದಾಯದ ನೌಕರರ ಬಳಿ ದುಡ್ಡಿದೆ, ಹಾಗೆ ಮೆದುಳಿನಲ್ಲಿ ಅಪಾರ ಬುದ್ಧಿಶಕ್ತಿ ಇದೆ. ಆ ಬುದ್ದಿಶಕ್ತಿಯ ಕಾರಣಕ್ಕೆ ಅವರು ಸರ್ಕಾರಿ ಕಚೇರಿಗಳಿಗೆ ನೌಕರರಾಗಿ ಬಂದಿರುವುದು. ಅಂದಹಾಗೆ ಬುದ್ಧಿಶಕ್ತಿ, ಅದು ಮಾತನಾಡುವ ಶಕ್ತಿ ಇರಬಹುದು, ಸಂಘಟನಾ ಶಕ್ತಿ ಇರಬಹುದು, ಬರೆಯುವ ಶಕ್ತಿ ಇರಬಹುದು, ಇದನ್ನೆಲ್ಲ ಸಮುದಾಯಕ್ಕೆ ವಾಪಸ್ ಕೊಡುವಂತೆ ಸಾಹೇಬರು ಹೇಳಿದರು. ಅದನ್ನೆ pay back to society ಎಂದರು.
ಶಿಕ್ಷಕನ ಕೈಕೆಳಗೆ ಐಎಎಸ್ ಅಧಿಕಾರಿಗಳು!
BAMCEF ಸಂಘಟನೆಯಲ್ಲಿದ್ದಾಗ ಅಲ್ಲಿ ನೌಕರರ ಕೇಡರ್ ಬಗ್ಗೆ ಅಂದರೆ ದರ್ಜೆಯ ಬಗ್ಗೆ ಯಾವುದೇ ತಾರತಮ್ಯವಿರಲಿಲ್ಲ. ಲಕ್ನೋದ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಹೇಳುವಂತೆ “ಕಾನ್ಷೀರಾಮ್ ರವರು ವಿವಿಧ ದರ್ಜೆಯ ನೌಕರರ ನಡುವೆ ಇದ್ದ ಸೇವಾ ಅಂದರೆ ನಾನು ಮೇಲ್ಮಟ್ಟದ ನೌಕರ ಅವನು ತಳಮಟ್ಟದ ನೌಕರ ಎಂಬ ಬೇಲಿಯನ್ನು ಮುರಿದರು. ಹೇಗೆಂದರೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಹೇಳುವಂತೆ “BAMCEF ನ ಸ್ಥಳೀಯ ಸಂಯೋಜಕನಾದ ಓರ್ವ ಶಿಕ್ಷಕನ ಮನೆಯಲ್ಲಿ ಐಎಎಸ್ ಅಧಿಕಾರಿಗಳೂ ಸೇರಿದಂತೆ ಕಚೇರಿಯ ಹಿರಿಯ ಅಧಿಕಾರಿಗಳೆಲ್ಲ ಆತ್ಮೀಯತೆಯಿಂದ ಸಭೆ ಸೇರುತ್ತಿದ್ದೆವು”.
ಭಾಷಣ ಕೇಳಲೂ ಹಣ ಕೊಡಬೇಕು!
ಕಾನ್ಷೀರಾಮ್ವರಿಗೆ ಪಕ್ಷ ಕಟ್ಟಲು ಇಷ್ಟೊಂದು ದುಡ್ಡು ಎಲ್ಲಿ ಬರುತ್ತದೆ? ಎಂಬುದು ಅಂದಿನ ಪತ್ರಕರ್ತರ ಸಂದೇಹವಾಗಿತ್ತು. ಆಗ ಕೆಲವು ಪತ್ರಕರ್ತರು ಕಾನ್ಷೀರಾಮ್ ರವರು ಅಂದಿನ ಉತ್ತರಪ್ರದೇಶದ ದೊಡ್ಡ ಬಿಸಿನೆಸ್ಮನ್ ಹಾಜಿ ಮಸ್ತಾನ್ ಮಿರ್ಝಿಯವರ ಜೊತೆ ಸಂಪರ್ಕದಲ್ಲಿದ್ದಾರೆ. ಅವರೇ ಇವರಿಗೆ ಹಣ ಕೊಡುವುದು ಎಂದು ಗುಲ್ಲೆಬ್ಬಿಸಿದರು. (ಯಾಕೆಂದರೆ 90ರ ದಶಕದಲ್ಲೇ ಲಕ್ನೋದಲ್ಲಿ ನಡೆದ ರ್ಯಾಲಿಯೊಂದರಲ್ಲಿ ದಾದಾಸಾಹೇಬರು ಜನರನ್ನು ಕರೆತರಲು ಬರೇ ಬಸ್ಸುಗಳಿಗೆ ಖರ್ಚು ಮಾಡಿದ್ದ ಹಣವೇ 22 ಲಕ್ಷ!) ಆಗ ಈ ಹಾಜಿ ಮಸ್ತಾನ್ ಮಿರ್ಝಿಯ ಕಥೆಗೆ ಸಾಹೇಬರು ಹೇಳಿದ್ದು “ಹಾಜಿ ಮಸ್ತಾನ್ ಸಣ್ಣ ವ್ಯಾಪಾರಿ. ಆತ ನನಗೆ ಎಷ್ಟು ಅಂತ ಕೊಡಲಿಕ್ಕೆ ಸಾಧ್ಯ? ನಿಜ ಹೇಳಬೇಕೆಂದರೆ ಭಾರತದ ಯಾವುದೇ ರಾಜಕೀಯ ಪಕ್ಷವೂ ಇಷ್ಟು ಹಣ ಖರ್ಚು ಮಾಡಿಲ್ಲ. ಅಷ್ಟು ಹಣವನ್ನು ನಾನು ಖರ್ಚು ಮಾಡಿದ್ದೇನೆ”. ಹಾಗಿದ್ದರೆ ಇದಕ್ಕೆಲ್ಲ ಹಣ? ಅದಕ್ಕೆ ದಾದಾಸಾಹೇಬರು ಹೇಳುವುದು “ನನಗೆ ವಿವಿಧ ಮೂಲಗಳಿಂದ ಹಣ ಬರುತ್ತದೆ. ಅಂದಹಾಗೆ ಆ ಮೂಲಗಳು ಎಂದೂ ಬತ್ತುವುದೇ ಇಲ್ಲ. ಮುಖ್ಯವಾಗಿ ಸದಸ್ಯತ್ವ ಶುಲ್ಕ ಮತ್ತು ಕಾಲಕಾಲಕ್ಕೆ ಕಾರ್ಯಕರ್ತರು ನೀಡುವ ದೇಣಿಗೆಯಿಂದ ಹಣ ಬರುತ್ತದೆ”. ಇದಲ್ಲದೆ ತಮ್ಮ ಭಾಷಣಗಳಿಗೆ ಕಡೇ ಪಕ್ಷ 52000 ಜನ ಸೇರಲೇಬೇಕು ಎಂದು ತಾಕೀತು ಮಾಡುತ್ತಿದ್ದ ಕಾನ್ಷೀರಾಮ್ರವರು ಕಡ್ಡಾಯವಾಗಿ ತಲಾ ಒಬ್ಬೊಬ್ಬರಿಂದ 1 ರೂನಂತೆ 52000 ಶುಲ್ಕ ವಸೂಲಿ ಮಾಡಿಸುತ್ತಿದ್ದರು! ಇದರ ಬಗ್ಗೆ ಜೋಕ್ ಕಟ್ ಮಾಡುತ್ತಿದ್ದ ಅವರು “ಈ ಮೊತ್ತವನ್ನು ಶೀಘ್ರದಲ್ಲೇ 1 ಲಕ್ಷಕ್ಕೆ ಏರಿಸಬೇಕೆಂದಿದ್ದೇನೆ” ಎನ್ನುತ್ತಿದ್ದರು. ಅಂದರೆ ಅವರು ಏರಿಸುತ್ತಿದ್ದದ್ದು ಬರೇ ಹಣವನ್ನಷ್ಟೆ ಅಲ್ಲ, ಜನರನ್ನೂ ಕೂಡ ಎಂಬುದು ಅಲ್ಲಿ ತಿಳಿಯಬೇಕಾದ ಅಂಶ!
ದಾದಾಸಾಹೇಬರನ್ನು ಸಿಐಎ ಏಜೆಂಟ್ ಎಂದ ಅಂದಿನ ಸರ್ಕಾರ!
ಅಬ್ಬಾ, 1987ರಲ್ಲಿ ಕಾನ್ಷೀರಾಮ್ರವರು ಉತ್ತರಪ್ರದೇಶದ ಬಿಜ್ನೋರ್ ನಿಂದ ಲೋಕಸಭೆಗೆ ಸ್ಪರ್ಧಿಸಿದರು. ಆ ಚುನಾವಣೆಯಲ್ಲಿ ಬಿಜ್ನೋರ್ ಜಿಲ್ಲೆ ಪೂರ್ತಿ ಒಂದು ಕರಪತ್ರ ಹಂಚಲಾಗಿತ್ತು ಮತ್ತು ಆ ಕರಪತ್ರದಲ್ಲಿದ್ದದ್ದು ಏನು ಗೊತ್ತೆ? ಕಾನ್ಷೀರಾಮ್ ಸಿಐಎ ಏಜೆಂಟ್ ಎಂದು! ಸಿಐಎ(ಸೆಂಟ್ರಲ್ ಇಂಟೆಲ್ಲೆಜೆನ್ಸಿ ಆಫ್ ಅಮೆರಿಕಾ) ಅದು ಭಾರತದ ‘ರಾ’ ಮತ್ತು ಪಾಕಿಸ್ತಾನದ ಐಎಎಸ್ಐ ನಂತೆ ಅಮೆರಿಕಾದ ಗುಪ್ತಚರ ಇಲಾಖೆ. ಅಂದರೆ ಭಾರತವನ್ನು ದುರ್ಬಲಗೊಳಿಸಲು ಅಮೆರಿಕಾ ಕಳುಹಿಸಿರುವ ಗುಪ್ತಚರ ಇಲಾಖೆಯ ಏಜೆಂಟ್ ಕಾನ್ಷೀರಾಮ್ ಎಂದು ಆ ಕರಪತ್ರದಲ್ಲಿ ಮುದ್ರಿಸಲಾಗಿತ್ತು! ಮತ್ತು ಚುನಾವಣಾ ಆ ಸಮಯದಲ್ಲಿ ಅದನ್ನು ಹಂಚಲಾಗಿತ್ತು. ಈ ಬಗ್ಗೆ ಆಕ್ರೋಶಭರಿತರಾಗಿ ಕಾನ್ಷೀರಾಮ್ರವರು ಹೇಳಿದ್ದು “ನಾನು ಸಿಐಎ ಏಜೆಂಟ್ ಆಗಿದ್ದರೆ ಈ ಸರ್ಕಾರವೇಕೆ ನನ್ನ ವಿರುದ್ಧ ಕ್ರಮ ಜರುಗಿಸಿಲ್ಲ? ಇದು ತೋರಿಸುವುದೇನೆಂದರೆ ಇದು ಹಿಜಡಾಗಳ ಸರ್ಕಾರ!” ಎಂದು.
ಜಾತಿಗಳನ್ನು ಒಗ್ಗೂಡಿಸುವವರು ಜಾತಿವಾದಿಯಾಗಲು ಹೇಗೆ ಸಾಧ್ಯ?
ಒಮ್ಮೆ ಪತ್ರಕರ್ತರು ದಾದಾಸಾಹೇಬರನ್ನು ಕೇಳಿದ್ದು “ಜಾತಿವಾದಿ ಪಕ್ಷವೊಂದನ್ನು ಕಟ್ಟಿರುವ ನಿಮ್ಮಿಂದ ಜಾತಿ ನಿರ್ಮೂಲನೆ ಹೇಗೆ ಸಾಧ್ಯ?” ಎಂದು. ಅದಕ್ಕೆ ಸಾಹೇಬರು ಕೊಟ್ಟ ಉತ್ತರ “ಬಿಎಸ್ಪಿ ಜಾತಿವಾದಿ ಪಕ್ಷವಲ್ಲ. ನಾವು ಈ ದೇಶದ 6000 ಜಾತಿಗಳನ್ನು ಒಗ್ಗೂಡಿಸುತ್ತಿದ್ದೇವೆ ಮತ್ತು ಹೀಗಿರುವಾಗ ನಮ್ಮನ್ನು ನೀವು ಯಾವ ಅರ್ಥದಲ್ಲಿ ಜಾತಿವಾದಿ ಎನ್ನುವಿರಿ?”. ಹೌದು, ದಾದಾಸಾಹೇಬರ ಮಾತಿನಂತೆ ಈ ದೇಶದ ಎಲ್ಲ ಜಾತಿಗಳೂ ಒಗ್ಗೂಡದೆ ಭವ್ಯ ಭಾರತ ನಿರ್ಮಾಣ ಸಾಧ್ಯವಿಲ್ಲ.
ಯತಾಸ್ಥಿತಿವಾದಿ ಗಾಂಧಿ
ಒಮ್ಮೆ ಪತ್ರಕರ್ತರು ಸಾಹೇಬರಿಗೆ “ನಿಮ್ಮ ಕಾರ್ಯಕರ್ತರು ಗಾಂಧಿ ಬಗ್ಗೆ ಇಷ್ಟೊಂದು ಹಗೆತನ ಸಾಧಿಸಲು ಏನು ಕಾರಣ?” ಎಂದರು. ಅದಕ್ಕೆ ದಾದಾಸಾಹೇಬರು ಹೇಳುತ್ತಾರೆ “ಗಾಂಧಿ ಈ ದೇಶದ ಪ್ರತಿಯೊಂದರ ಮೂಲ! ನನಗೆ ಬದಲಾವಣೆ ಬೇಕು, ಡಾ.ಅಂಬೇಡ್ಕರ್ರವರು ಕೂಡ ಬದಲಾವಣೆ ಬಯಸಿದ್ದರು. ಆದರೆ ಗಾಂಧಿ ಯತಾಸ್ಥಿತಿವಾದದ ವಾರಸುದಾರರು. ಅವರಿಗೆ ಶೂದ್ರ ಶೂದ್ರನಾಗೇ ಉಳಿಯಬೇಕು. ಅಂದಹಾಗೆ ಗಾಂಧಿ ಈ ದೇಶವನ್ನು ಇಬ್ಬಾಗಗೊಳಿಸಲು ಏನೇನುಮಾಡಬೇಕೋ ಅದೆಲ್ಲವನ್ನೂ ಮಾಡಿದರು. ಈ ನಿಟ್ಟಿನಲ್ಲಿ ಹೇಳುವುದಾದರೆ ನಾವು ಈ ದೇಶವನ್ನು ಒಗ್ಗೂಡಿಸುವ ದಿಸೆಯಲ್ಲಿ ಕೆಲಸಮಾಡುತ್ತಿದ್ದೇವೆ ಮತ್ತು ಎಲ್ಲ ರೀತಿಯ ಮಾನವ ನಿರ್ಮಿತ ವಿಭಜನೆಗಳನ್ನು ತೊಲಗಿಸುತ್ತೇವೆ”!
ಬಹುಜನ ಸಮಾಜ ಪಕ್ಷವೇ ಯಾಕೆ?
ಈ ಪ್ರಶ್ನೆಗೆ ಕಾನ್ಷೀರಾಮ್ ರವರು ಬರೆಯುತ್ತಾರೆ “ಇಂದು ಭಾರತದಲ್ಲಿ ಏಳು ರಾಷ್ಟ್ರೀಯ ಪಕ್ಷಗಳಿವೆ. ಈ ಎಲ್ಲ ಏಳು ರಾಷ್ಟ್ರೀಯ ಪಕ್ಷಗಳು ಪ್ರಬಲ ಹಿಂದೂ ಜಾತಿಗಳ ಕೈಯಲ್ಲಿವೆ. ಆ ಪ್ರಬಲ ಜಾತಿಗಳವರು ತಮ್ಮ ಆಳ್ವಿಕೆ ಮುಂದುವರೆಸಲು ಮತ್ತು ಹಿತಾಸಕ್ತಿ ಕಾಪಾಡಿಕೊಳ್ಳಲು ಈ ಏಳೂ ಪಕ್ಷಗಳನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ. ಈ ಕಾರಣಕ್ಕೆ ದಲಿತ-ಶೋಷಿತ ಸಮಾಜ ತನ್ನ ಬಳಿ ಶೇ.85 ಮತ ಬ್ಯಾಂಕ್ ಇದ್ದರೂ ಕೂಡ ಅಸಹಾಯಕ ಪರಿಸ್ಥಿತಿಯಲ್ಲಿದೆ. ಇದಕ್ಕಾಗಿ ನನಗೆ ಅನಿಸಿದ್ದೆಂದರೆ ನಾವು ನಮ್ಮದೇ ಆದ ಸ್ವಂತ ರಾಜಕೀಯ ಪಕ್ಷ ಹೊಂದಬೇಕು” ಎಂಬುದು.
ತ್ಯಾಗಕ್ಕೆ ಮತ್ತೊಂದು ಹೆಸರೇ ಕಾನ್ಷೀರಾಮ್
ತ್ಯಾಗ; ಬಹುಶಃ ಈ ಪದ ಕಾನ್ಷೀರಾಮ್ ರವರಿಗೆ ಅನ್ವರ್ಥವಾಗುತ್ತದೆ. ಮಹಾಭಾರತದಲ್ಲಿ ಕರ್ಣ ತನ್ನ ಕಲಶ ಕುಂಡಲಿಗಳನ್ನು ಕೊಟ್ಟು ತನ್ನ ಪ್ರಾಣ ತ್ಯಾಗ ಮಾಡಿದ. ಆದರೆ ದಾದಾಸಾಹೇಬರು? ತಮ್ಮ ನೌಕರಿ, ತಮ್ಮ ಕುಟುಂಬ, ತಮ್ಮ ಬಳಿಯಿದ್ದ ನೌಕರಿಯಿಂದ ಸಂಪಾದಿಸಿದ್ದ ಆ ಹಣ ಮತ್ತು ಆ ನೌಕರಿಯಿಂದ ಮಜಾ ಮಾಡಬಹುದಾಗಿದ್ದ ಆ ಅಮೂಲ್ಯ ಸಮಯ ಎಲ್ಲವನ್ನೂ ತ್ಯಾಗಮಾಡಿದರು. ಸರ್ಕಾರಿ ನೌಕರರಾಗಲು ಎಲ್ಲರೂ ಹಪಹಪಿಸುವುದನ್ನು ನೋಡುತ್ತೇವೆ. ಅದೂ ದಾದಾಸಾಹೇಬರು ಆ ಕಾಲದಲ್ಲೇ ಬಿಎಸ್ಸಿ ಮಾಡಿ ಡಿಆರ್ಡಿಒದಂಥ ಉನ್ನತ ಸಂಸ್ಥೆ ಸೇರಿದ್ದರು. ನಿವೃತ್ತಿಯಾಗುವ ಹೊತ್ತಿಗೆ ಅವರು ಈ ದೇಶದ ದೊಡ್ಡ ವಿಜ್ಞಾನಿಯಾಗಿ ಲಕ್ಷ ಲಕ್ಷ ಗಳಿಸಿ ವೈಭವೋಪೇತ ಜೀವನ ನಡೆಸಬಹುದಿತ್ತು. ಆದರೆ ಶೋಷಿತ ಸಮುದಾಯಕ್ಕೋಸ್ಕರ ಅದನ್ನು ಬಿಟ್ಟದ್ದು, ಶೋಷಿತ ಬಹುಜನರ ಏಳಿಗೆಗಾಗಿ ತಾನು ಮದುವೆ ಮಾಡಿಕೊಳ್ಳುವುದಿಲ್ಲ ಎಂದು ಶಪಥಗೈದದ್ದು, ಅಂತೆಯೇ ನುಡಿದಂತೆ ನಡೆದದ್ದು, ಅಗಾಧವನ್ನು ಸಾಧಿಸಿದ್ದು, ಬಹುಶಃ ಆ ತ್ಯಾಗಕ್ಕೆ ಎಣೆಯಿಲ್ಲ. ವರ್ಣಿಸಲು ಪದಗಳಿಲ್ಲ. ತನ್ನ ಪರಿಮಳವನ್ನು ಪ್ರಪಂಚಕ್ಕೆ ನೀಡಿ ತಾನು ಬಾಡುವ ಸುಂದರ ಹೂವು ಕಾನ್ಷೀರಾಮ್ರವರು. ನಿಂತುಹೋಗಿದ್ದ ಅಂಬೇಡ್ಕರ್ ರಥವನ್ನು 40 ವರ್ಷಗಳ ಕಾಲ ಮುನ್ನಡೆಸಿದರು. ಮರೆತುಹೋಗಬಹುದಾಗಿದ್ದ ಜೈಭೀಮ್ ಅನ್ನು ಬಾನೆತ್ತರಕೆ ಮೊಳಗಿಸಿದರು. ಅವರು ಇಂದು ನಮ್ಮ ನಡುವೆ ಇಲ್ಲದಿರಬಹುದು (ನಿಧನ; ಅಕ್ಟೋಬರ್ 9, 2006). ಆದರೆ ಅವರ ಅಮರ ತ್ಯಾಗ ನಮ್ಮ ನಡುವೆ ಉಳಿಯುತ್ತದೆ… ನಮ್ಮನ್ನು ಸದಾ ಕಾಡುತ್ತದೆ… ಅಶ್ರುತರ್ಪಣದೊಂದಿಗೆ…
ಜೈಭೀಮ್… ಜೈಭಾರತ್… ಜೈಕಾನ್ಷೀರಾಮ್…
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಮತದಾರ ದೇವರು’ ಎಂದ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮೇರು ನಟ ಡಾ.ರಾಜ್ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ಮತದಾರ ದೇವರು”. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ ಎಂದರು.
ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.
ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.
ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.
ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.
ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.
ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್.
ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ
ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ.
ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.
ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸುವ ವ್ಯರ್ಥಪ್ರಯತ್ನವನ್ನು ನಾನು ಮಾಡುವುದಿಲ್ಲ. ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.
ಜಾತಿ, ದುಡ್ಡು ಮತ್ತು ತೋಳ್ಬಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.
ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.
ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.
ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.
ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.
ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.
ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.
ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.
ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.
ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.
ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ.. ಮತ್ತೊಮ್ಮೆ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮಗಳಲ್ಲಿ ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗ್ರಾಮ ಆಡಳಿತಾಧಿಕಾರಿ ಕೋಸಗಿ ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹುಲಿಕಟ್ಟೆ ಸರ್ಕಲ್ ವ್ಯಾಪ್ತಿಯ ಹಾರಕನಾಳು, ಹುಲಿಕಟ್ಟೆ, ಚನ್ನಳ್ಳಿ ತಾಂಡ, ಈಶಾಪುರ, ಹಾರಕನಾಳು ಸಣ್ಣತಾಂಡ, ಹಾರಕನಾಳು ದೊಡ್ಡತಾಂಡ, ಕನ್ನಾಯಕನಹಳ್ಳಿ ಸೇರಿ ಒಟ್ಟು 07 ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೋಸಗಿ ಸುರೇಶ ಎಂಬುವವರು ರೈತರೊಂದಿಗೆ ಒಪ್ಪಂದ ಮಾಡಿಕೊಂಡು, ಪ್ರತಿ ವರ್ಷ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಬೆಳೆಗಳಿಗೆ ತಾವೇ ಎಲ್ಲಾ ರೈತರ ಜಮೀನಿಗೆ ಬೆಳೆ ವಿಮೆ ಹಣ ಪಾವತಿಸುವ ಮೂಲಕ ನಿರಂತರವಾಗಿ 3 ವರ್ಷಗಳಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿಗಳನ್ನು ವಂಚಿಸುತ್ತ ಬಂದಿರುವ ಮಾಹಿತಿಯು ಸಾಕಷ್ಟು ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ. ಈ ಬಗ್ಗೆ ರೈತರು ಸಾಕಷ್ಟು ಪ್ರತಿಭಟನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೂ ದೂರು ನೀಡಿರುತ್ತಾರೆ.
ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯಲ್ಲಿನ ಭ್ರಷ್ಟಚಾರದ ಪ್ರಮುಖ ರೂವಾರಿಯಾದ ಕೋಸಗಿ ಸುರೇಶ ಎಂಬುವವರು ತಾವು ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಗುಂಡಗತ್ತಿ ಸರ್ಕಲ್ ವ್ಯಾಪ್ತಿಯ ಬಹು ಗ್ರಾಮಗಳಲ್ಲಿಯೂ ಫಸಲ್ ಭೀಮಾ ಯೋಜನೆಯಲ್ಲಿ (ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ) ಸಾಕಷ್ಟು ಅವ್ಯವಹಾರ ನಡೆಸುತ್ತ ಬಂದಿರುತ್ತಾರೆ ಎಂಬ ಅಧಿಕೃತ ಮಾಹಿತಿ ಇರುತ್ತದೆ. ಇವರು ತಾವು ಕೆಲಸ ಮಾಡಿದ ಎಲ್ಲಾ ಸ್ಥಳಗಳಲ್ಲಿಯೂ ಸಾಕಷ್ಟು ಅವ್ಯವಹಾರದಲ್ಲಿ ಭಾಗಿಯಾಗಿದ್ದು, ಸಾಕಷ್ಟು ರೈತರಿಗೆ ಸರ್ಕಾರಿ ಯೋಜನೆಗಳನ್ನು ಮಾಡಿಸಿಕೊಡುವುದಾಗಿ ಕೋಟ್ಯಾಂತರ ರೂಪಾಯಿ ಲಂಚ ಪಡೆದಿರುತ್ತಾರೆ. ಹಾಗೆಯೇ ಬಡವರು, ಅಸಹಾಯಕರ ಜಮೀನುಗಳನ್ನು ಪ್ರಬಲರ ಹೆಸರಿಗೆ ವರ್ಗಾಹಿಸುವ ನೀಚ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ.
ಬಡವರ ಜಮೀನುಗಳನ್ನು ಪ್ರಬಲರ ಹೆಸರಿಗೆ ಮಾಡಿದ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದು ನಂತರ ಮೂಲ ಖಾತೆದಾರರಿಗೆ ವರ್ಗಾವಣೆಯಾಗಿರುವ ಸಾಕಷ್ಟು ನಿದರ್ಶನಗಳಿಗೆ. ಆದರೆ ಯಾವುದೇ ಒಂದು ಪ್ರಕರಣದಲ್ಲಿಯೂ ಈ ಅಧಿಕಾರಿಗೆ ಶಿಕ್ಷೆಯಾಗದಂತೆ ಹಿರಿಯ ಅಧಿಕಾರಿಗಳರಿವರನ್ನು ಕಾಪಾಡಿಕೊಂಡು ಬಂದಿರುತ್ತಾರೆ. ಈ ಕಾರಣಕ್ಕಾಗಿಯೇ ಫಸಲ್ ಭೀಮಾ ಯೋಜನೆಯಂತಹ ದೊಡ್ಡ ಮಟ್ಟದ ಹಗರಣಕ್ಕೂ ಮುಂದಾಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳನ್ನು ಆಧಾರವಾಗಿಟ್ಟುಕೊಂಡು ಫಸಲ್ ಭೀಮಾ ಯೋಜನೆಯ ಅವ್ಯವಹಾರದಲ್ಲಿ ಭಾಗಿಯಾಗಿರುವ ಹಾರಕನಾಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಎಂ.ಶಿವಣ್ಣ, ಕಂದಾಯ ನಿರೀಕ್ಷಕ ಶ್ರೀ ರಾಘವೇಂದ್ರ, ಹರಪನಹಳ್ಳಿ ತಾಲ್ಲೂಕು ಉಪ ತಹಶೀಲ್ದಾರರಾದ ಶ್ರೀಮತಿ ಕವಿತಾ, ತಹಶೀಲ್ದಾರರಾದ ಶ್ರೀ ಬಿ.ವಿ. ಗಿರೀಶ್ಬಾಬು, ಉಪವಿಭಾಗಾಧಿಕಾರಿಯಾದ ಶ್ರೀ ಸುರೇಶ್ಕುಮಾರ್ ಟಿ, ಹರಪನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ವೈ.ಹೆಚ್. ಚಂದ್ರಶೇಖರ್, ವಿಜಯನಗರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕವಿತಾ ಮನ್ನಿಕೇರಿ ಇವರುಗಳ ವಿರುದ್ಧ ದೂರು ದಾಖಲಿಸಿ, ಈ ಎಲ್ಲಾ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ ಎಂಬುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ತನ್ನ 75 ವರ್ಷಗಳ ಅತ್ಯುತ್ತಮ ಶೈಕ್ಷಣಿಕ ಸೇವೆಯ ನೆನಪಿಗಾಗಿ (1951-2026) ಹಮ್ಮಿಕೊಂಡಿರುವ ಭವ್ಯ “ವಜ್ರ ಮಹೋತ್ಸವ ಕಾರ್ಯಕ್ರಮವು ಮೇ 29 ಮತ್ತು 30 ರಂದು ಕಾಲೇಜಿನ ಆವರಣದಲ್ಲಿ ಜರುಗಲಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಂಗಸಂಸ್ಥೆಯಾಗಿರುವ ಈ ಕಾಲೇಜಿನ ಉದ್ಘಾಟನಾ ಸಮಾರಂಭವು ಮೇ 29 ರ ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಆರಂಭವಾಗಲಿದ್ದು, ದೇಶ ಹಾಗೂ ರಾಜ್ಯದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಸಿ. ಪಿ. ರಾಧಾಕೃಷ್ಣನ್, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿ.ಟಿ.ಯು. ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಗಣಿ ಮತ್ತು ಭೂ ವಿಜ್ಞಾನ , ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಮಂಡಳಿ (FTE&M) ಅಧ್ಯಕ್ಷರಾದ ಪ್ರೊ. ಟಿ. ಜಿ. ಸಿತಾರಾಮ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ವಿ.ಟಿ.ಯು ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್, ರಿಜಿಸ್ಟ್ರಾರ್ ಡಾ. ಪ್ರಸಾದ್ ಬಿ ರಾಂಪುರೆ , ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಉಜ್ವಲ್ ಯು.ಜೆ , ಹಣಕಾಸು ಅಧಿಕಾರಿ ಡಾ. ಪ್ರಶಾಂತ್ ನಾಯಕ್ , ಯು.ಬಿ.ಡಿ.ಟಿ.ಇ ಪ್ರಾಂಶುಪಾಲರಾದ ಡಾ. ಡಿ. ಪಿ. ನಾಗರಾಜಪ್ಪ ಮತ್ತು ವಿವಿ ಪದಾಧಿಕಾರಿಗಳು ಕಾರ್ಯಕ್ರಮದ ಆತಿಥ್ಯ ವಹಿಸಲಿದ್ದಾರೆ.
ವಿಶೇಷ ಅತಿಥಿಗಳಾಗಿ ಶಾಸಕರುಗಳಾದ ಶಾಂತನಗೌಡ ಡಿ.ಜಿ., ಬಿ. ದೇವೇಂದ್ರಪ್ಪ, ಬಿ. ಪಿ. ಹರೀಶ್, ಶ್ರೀ ಬಸವರಾಜು ವಿ. ಶಿವಗಂಗಾ, ಕೆ. ಎಸ್. ಬಸವಂತಪ್ಪ, ಸಮರ್ಥ್ ಶಾಮನೂರು, ವಿಧಾನಪರಿಷತ್ ಸದಸ್ಯರುಗಳಾದ ಎಸ್.ಎಲ್. ಭೋಜೆಗೌಡ, ಡಿ.ಎಸ್.ಅರುಣ್, ಡಾ. ಧನಂಜಯ್ ಸರ್ಜಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಹಾಗೂ ಚಳ್ಳಕೆರೆ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಾಲೇಜಿನ ಹಳೆಯ ವಿದ್ಯಾರ್ಥಿ ಟಿ. ರಘುಮೂರ್ತಿ , ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಕಾಲೇಜಿನ ಹಳೆಯ ವಿದ್ಯಾರ್ಥಿ ಜನಾರ್ಧನ ಸ್ವಾ̧ಮಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
-
ದಿನದ ಸುದ್ದಿ6 days agoದಾವಣಗೆರೆ | ಇಂದು ಕರೆಂಟ್ ಇರಲ್ಲ
-
ದಿನದ ಸುದ್ದಿ2 days ago‘ಮತದಾರ ದೇವರು’ ಎಂದ ಸಿದ್ದರಾಮಯ್ಯ


