ಲೈಫ್ ಸ್ಟೈಲ್
ಕಾಯಕಯೋಗಿ ನುಲಿಯ ಚಂದಯ್ಯನವರ ಸ್ಮರಣೋತ್ಸವ
- ಡಾ.ಗೀತಾಬಸವರಾಜು,ಉಪನ್ಯಾಸಕರು,ಎ.ವಿ.ಕೆ.ಕಾಲೇಜು, ದಾವಣಗೆರೆ
(ಕಾಯಕವನ್ನೇ ತನ್ನ ಉಸಿರಾಗಿಸಿಕೊಂಡು ಸಮಾಜಕ್ಕೆ ಕರ್ತವ್ಯ ಪ್ರಜ್ಞೆ ಸಾರಿ ಕಾಯಕ ದಾಸೋಹದ ಮೂಲಕ ಮನುಕುಲಕ್ಕೆ ಬೆಳಕು ನೀಡಿದ ಮಹಾ ಶಿವಶರಣ ನುಲಿಯ ಚಂದಯ್ಯನವರ ಸ್ಮರಣೋತ್ಸವ ಜೂನ್ 29 ರಂದು ನಡೆಯಲಿದೆ ತನ್ನಿಮಿತ್ತ ಈ ಲೇಖನ)
ಕರ್ನಾಟಕ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ತವರೂರು. ಇಲ್ಲಿ ವಿವಿಧ ಧರ್ಮ , ಜಾತಿಯವರು ನೆಲೆಸಿದ್ದು, ಅನೇಕತೆಯಲ್ಲಿ ಏಕತೆಯನ್ನು ರೂಢಿಸಿಕೊಂಡು ಪ್ರೀತಿ, ದಯೆ, ಕರುಣೆ, ಸಹನೆ, ನಂಬಿಕೆ, ಭಾವೈಕ್ಯತೆ ಮುಂತಾದ ಮಾನವೀಯ ಸಂಬಂಧಗಳೊಂದಿಗೆ ಬದುಕುತ್ತಿದ್ದಾರೆ.
ಬಲ್ಲವನೆ ಬಲ್ಲ ಬೆಲ್ಲದ ಸವಿಯ ಎಂಬ ನುಡಿಯಂತೆ 12 ನೇ ಶತಮಾನ ಸರ್ವರಿಗೂ ಸಿಹಿಯನ್ನು ಉಣಬಡಿಸಿದ ಕಾಲ. ಸಕಲ ಜೀವಾತ್ಮರಿಗೆ ಲೇಸನ್ನು ಬಯಸಿ ಸಮಾಜದಲ್ಲಿ ಸಾಮರಸ್ಯ ಮೂಡಿಸಿದವರು ವಚನಕಾರರು. ವಿಶ್ವಗುರು ಬಸವೇಶ್ವರರ ಅನುಭವ ಮಂಟಪದ ಅನೇಕ ಕಾಯಕ ಮಣಿಗಳಲ್ಲಿ ಚಂದಯ್ಯನವರ ಹೆಸರು ಸ್ಮರಣೀಯ.
ಆರ್.ನುಲೇನೂರು ವಚನಕಾರ ನುಲಿಯ ಚಂದಯ್ಯ ಲಿಂಗೈಕ್ಯರಾದ ಪುಣ್ಯಭೂಮಿ. ಶಿವಶರಣ ಚಂದಯ್ಯನವರು ಇಲ್ಲಿ ನೆಲೆಸಿದ್ದರಿಂದ ಮತ್ತು ಹಗ್ಗ ನುಲಿಯುವ (ಹೊಸೆಯುವ) ಕಾಯಕ ಮಾಡುತ್ತಿದ್ದುದರಿಂದ ನುಲಿಯಯ್ಯನೂರು, ನುಲಿಯನೂರು, ನುಲೇನೂರು ಎಂಬ ಹೆಸರು ಬಂದಿದೆ. ರಾಮಗಿರಿ ಸಮೀಪವಿರುವುದರಿಂದ ಆರ್ ನುಲೇನೂರು ಎಂದು ಕರೆಯಲಾಗುತ್ತದೆ. ಕಾಯಕವನ್ನೇ ತನ್ನ ಉಸಿರಾಗಿಸಿಕೊಂಡು ಸಮಾಜಕ್ಕೆ ಕರ್ತವ್ಯ ಪ್ರಜ್ಞೆ ಸಾರಿದ ಚಂದಯ್ಯನವರು ಕಾಯಕ ದಾಸೋಹದ ಮೂಲಕ ಮನುಕುಲಕ್ಕೆ ಬೆಳಕು ನೀಡಿದ ಮಹಾ ಶಿವಶರಣ.
“ಗುರುವಾದರೂ ಕಾಯಕದಿಂದಲೇ ಜೀವನ್ಮುಕ್ತಿ ಲಿಂಗವಾದರೂ ಕಾಯಕದಿಂದಲೇ ಶಿಲೆಯ ಕುರುಹು ಹರಿವುದು
ಜಂಗಮವಾದರೂ ಕಾಯಕದಿಂದಲೇ ತನ್ನ ವೇಷದ ಪಾಶ ಹರಿವುದು
ಗುರುವಾದರೂ ಚರಸೇವೆಯ ಮಾಡಬೇಕು
ಲಿಂಗವಾದರೂ ಚರಸೇವೆಯ ಮಾಡಬೇಕು
ಜಂಗಮವಾದರೂ ಚರಸೇವೆಯ ಮಾಡಬೇಕು
ಇದು ಚಂದೇಶ್ವರ ಲಿಂಗದರಿವು ಕೇಳಾ ಪ್ರಭುವೇ”
ನುಲಿಯ ಚಂದಯ್ಯನವರ ಇದೊಂದು ವಚನ ಕಾಯಕದ ಮಹತ್ವವನ್ನು ತಿಳಿಸುತ್ತದೆ.
ವಿಜಯಪುರ ಜಿಲ್ಲೆಯ ಶಿವಣಗಿ ಎಂಬ ಗ್ರಾಮದಲ್ಲಿ ಜನಿಸಿದ ಚಂದಯ್ಯನವರು ಹೊಡಕೆ ಹುಲ್ಲನ್ನು ತಂದು ಹಗ್ಗ ಹೊಸೆಯುವ ಕಾಯಕವನ್ನು ನಡೆಸಿ ಅದರಿಂದ ಬಂದ ಹಣವನ್ನು ಗುರು – ಲಿಂಗ – ಜಂಗಮಕ್ಕೆ ಅರ್ಪಿಸುತ್ತಿದ್ದರು. ಕಾಯಕ ಭಾವ ಶುದ್ಧವಾಗಿರಬೇಕು. ಜಂಗಮ ದಾಸೋಹವು ನಿಜವಾದ ಶಿವಪೂಜೆ ಎನ್ನುವುದು ಅವರ ನಿಲುವಾಗಿತ್ತು.
ಕಲ್ಯಾಣದಲ್ಲಿ ಕ್ರಾಂತಿಯಾದಾಗ ನುಲಿಯ ಚಂದಯ್ಯನವರು ಉಳವಿ, ಶಿವಮೊಗ್ಗ, ಎಣ್ಣೆಹೊಳೆ, ನಂದಿಗ್ರಾಮ, ಶಾಂತಿಸಾಗರ, ಬೆಂಕಿಕೆರೆ ಮೂಲಕ ದುಮ್ಮಿಗೆ ಬಂದು ನೆಲೆಸುತ್ತಾರೆ. ಅಲ್ಲಿನ ಪಾಳೆಗಾರ ದುಮ್ಮಣ್ಣನಾಯಕನ ಪರಿಚಯವಾಗುತ್ತದೆ. ನಾಯಕನ ರಾಣಿ ಪದ್ಮಾವತಿ ಚಂದಯ್ಯನ ವಿಚಾರಧಾರೆಗಳಿಗೆ ಮನ:ಪರಿವರ್ತಿತಳಾಗಿ ಲಿಂಗವಂತ ಧರ್ಮದ ದೀಕ್ಷೆಯನ್ನು ಪಡೆದು ಅರಮನೆಯಲ್ಲಿ ಆಶ್ರಯವನ್ನು ನೀಡುತ್ತಾಳೆ.
ಅರಮನೆಯ ವಾತಾವರಣ ಶರಣ ಸಂಸ್ಕೃತಿಗೆ ಹೊಂದಿಕೆಯಾಗದ ಕಾರಣ ಪದ್ಮಾವತಿಯು ತನ್ನ ತವರೂರಾದ ಆರ್.ನುಲೇನೂರಿಗೆ(ಪದ್ಮಾವತಿ ಪಟ್ಟಣ)ಆಹ್ವಾನಿಸುತ್ತಾಳೆ. ನಂತರ ಅಲ್ಲೊಂದು ಶಿಲಾಮಂಟಪ ನಿರ್ಮಿಸಿ ನಿತ್ಯಕಾಯಕ ದಾಸೋಹಕ್ಕೆ ಹಾಗೂ ಅನುಭಾವ ಗೋಷ್ಠಿ ನಡೆಸಲು ಅವಕಾಶ ಕಲ್ಪಿಸುತ್ತಾಳೆ. ಚಂದಯ್ಯನವರು ಬದುಕಿನ ಕೊನೆಯವರೆಗೆ ಇದೇ ಗ್ರಾಮದಲ್ಲಿ ನೆಲೆಸಿದ್ದು ತಮ್ಮ ಇಷ್ಟಲಿಂಗ ಚಂದೇಶ್ವರ ಲಿಂಗದಲ್ಲಿ ಒಂದಾದರು ಎಂದು ಪ್ರತೀತಿ ಇದೆ.
ಚಂದಯ್ಯನವರ ಬಗ್ಗೆ ಅನೇಕ ಕಥೆಗಳು ಪ್ರಚಲಿತದಲ್ಲಿವೆ. ಒಮ್ಮೆ ಹೊಡಕೆ ಹುಲ್ಲು ಕೊಯ್ಯುವಾಗ ಚಂದಯ್ಯನವರ ಕೊರಳಲ್ಲಿದ್ದ ಇಷ್ಟಲಿಂಗವು ಜಾರಿ ನೀರಲ್ಲಿ ಬಿದ್ದಿತು. ಲಿಂಗವನ್ನು ಲೆಕ್ಕಿಸದೆ ಅವರು ಹಾಗೆ ಹೊರಟುಬಿಟ್ಟರು. ಲಿಂಗವು ತನ್ನನ್ನು ಸ್ವೀಕರಿಸಬೇಕೆಂದು ಅಂಗಲಾಚಿ ಕೇಳಿಕೊಂಡರೂ ಅದನ್ನು ಗಮನಿಸದೆ, ನನಗೆ ನಿನಗಿಂತ ಜಂಗಮಾರಾಧನೆ ಮುಖ್ಯ ಎಂದು ಹೇಳಿ ಕಾಯಕದಲ್ಲಿ ನಿರತರಾದರು. ಕೊನೆಗೆ ಮಡಿವಾಳ ಮಾಚಯ್ಯನವರ ಸಂಧಾನದಿಂದ ಲಿಂಗವನ್ನು ಸ್ವೀಕರಿಸಿದರು. ಇವರ ಕಾಯಕ ಪ್ರಜ್ಞೆ ಎಷ್ಟಿತ್ತು ಎಂಬುದಕ್ಕೆ ಈ ಘಟನೆ ನಿದರ್ಶನ.
ಒಮ್ಮೆ ಕೆರೆಯ ನೀರನ್ನು ಬಳಸುವ ವಿಷಯದಲ್ಲಿ ಗ್ರಾಮದ ಕೆಲವರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಚಂದಯ್ಯ ಕೆರೆಯ ದಡದ ಬಳಿ ಬೆತ್ತದಿಂದ ನೆಲ ಮುಟ್ಟಿದಾಗ ಬಾವಿ ಸೃಷ್ಠಿಯಾಗಿ ನೀರು ಉಕ್ಕಿತು. ಇದೇ ಬಾವಿಯ ನೀರನ್ನು ಪೂಜಾಕಾರ್ಯಗಳಿಗೆ ಬಳಸುತ್ತಿದ್ದರು. ಇಂದಿಗೂ ಕೆರೆಯ ಪಕ್ಕದಲ್ಲಿ ಈ ಬಾವಿಯಿದ್ದು ಚಂದಯ್ಯನ ಬಾವಿ ಎಂದೇ ಪ್ರಸಿದ್ದಿಯಾಗಿದೆ.
ಕಾಯಕವು ಅಂತರಂಗ ಬಹಿರಂಗ ಶುದ್ಧಿಗೆ ಸೋಪಾನ. ಕಾಯಕವು ನಮ್ಮ ನಿತ್ಯಬದುಕಿನಲ್ಲಿ ನಿತ್ಯ ಕಾಯದ ಮೂಲಕವಾಗಿ ನಡೆಯುವ ಧ್ಯಾನ. ಶರಣರ ಕಾಯಕದಲ್ಲಿ ಕೇವಲ ಧನಕ್ಕೆ ಪ್ರಾಶಸ್ತ್ಯವಿರದೆ ಅದರ ಸತ್ಪಾತ್ರತೆಗೆ ಪ್ರಾಶಸ್ತ್ಯವಿತ್ತು. ಕಾಯಕದ ಉದ್ದೇಶ ಗುರು-ಲಿಂಗ-ಜಂಗಮ ದಾಸೋಹಕ್ಕೆ ಆದರೆ ತ್ರಿವಿಧ ದಾಸೋಹಕ್ಕೆ ನೈವೇದ್ಯವಾಗಬಲ್ಲ ದ್ರವ್ಯ ಪದಾರ್ಥ ‘ಸತ್ಯ ಶುದ್ಧ ಕಾಯಕದ ‘ ಪ್ರತಿನಿತ್ಯದ ದ್ರವ್ಯವೇ ಆಗಿರಬೇಕು ಎಂಬ ನಿಲುವು ಚಂದಯ್ಯನವರದು. ಸತ್ಯ ಶುದ್ಧ ಕಾಯಕದಲ್ಲಿ ನಿರತರಾಗಿ ಸಾರ್ಥಕ ಬದುಕನ್ನು ನಡೆಸಿದ ಕಾಯಕಯೋಗಿ ಚಂದಯ್ಯನವರು ಲಿಂಗೈಕ್ಯರಾದ ಸ್ಥಳವನ್ನು 1956ರಲ್ಲಿ ಜೀರ್ಣೋದ್ದಾರ ಮಾಡಲಾಗಿದೆ. ಪ್ರಾಚ್ಯವಸ್ತು ಪುರಾತತ್ವ ಇಲಾಖೆಯ ವತಿಯಿಂದ 38 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸಲಾಗಿದೆ.
ಜೂನ್ 29 ರಂದು ಪೂಜ್ಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಕಾಯಕಯೋಗಿ ಶರಣ ನುಲಿಯ ಚಂದಯ್ಯನವರ ಸ್ಮರಣೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಸಮಾಜದಲ್ಲಿದ್ದ ಅಂಧಕಾರ, ಮೂಢನಂಬಿಕೆ ಜಾತಿ ಬೇಧ ದೂರಮಾಡಿ ಸದ್ಬುದ್ಧಿ, ಸದಾಚಾರ, ಸಹಬಾಳ್ವೆ ಮುಂತಾದ ಮಾನವೀಯ ಗುಣಗಳನ್ನು ಬಿತ್ತಿ ಸಮಸಮಾಜ ನಿರ್ಮಿಸಿದ ಶರಣರ ದೃಷ್ಟಿಕೋನದಂತೆ ತಾಲೂಕು ಸಾಧು ವೀರಶೈವ ಸಂಘ(ರಿ) ಶ್ರೀ ತರಳಬಾಳು ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ಹೊಳಲ್ಕೆರೆ.
ಸಮಸ್ತ ಗ್ರಾಮಸ್ಥರು ಆರ್.ನುಲೇನೂರು ಇವರ ಸಂಯುಕ್ತಾಶ್ರಯದಲ್ಲಿ ವರ್ಗ, ಲಿಂಗಬೇಧವಿಲ್ಲದೆ ಚಂದಯ್ಯನವರ ಸ್ಮರಣೋತ್ಸವ ಮತ್ತು ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವುದರ ಮೂಲಕ ಕಾಯಕ ಯೋಗಿಗೆ ಗೌರವ ಸಲ್ಲಿಸಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ1 day agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ1 day agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ





