ಲೈಫ್ ಸ್ಟೈಲ್
ಕಾಯಕಯೋಗಿ ನುಲಿಯ ಚಂದಯ್ಯನವರ ಸ್ಮರಣೋತ್ಸವ
- ಡಾ.ಗೀತಾಬಸವರಾಜು,ಉಪನ್ಯಾಸಕರು,ಎ.ವಿ.ಕೆ.ಕಾಲೇಜು, ದಾವಣಗೆರೆ
(ಕಾಯಕವನ್ನೇ ತನ್ನ ಉಸಿರಾಗಿಸಿಕೊಂಡು ಸಮಾಜಕ್ಕೆ ಕರ್ತವ್ಯ ಪ್ರಜ್ಞೆ ಸಾರಿ ಕಾಯಕ ದಾಸೋಹದ ಮೂಲಕ ಮನುಕುಲಕ್ಕೆ ಬೆಳಕು ನೀಡಿದ ಮಹಾ ಶಿವಶರಣ ನುಲಿಯ ಚಂದಯ್ಯನವರ ಸ್ಮರಣೋತ್ಸವ ಜೂನ್ 29 ರಂದು ನಡೆಯಲಿದೆ ತನ್ನಿಮಿತ್ತ ಈ ಲೇಖನ)
ಕರ್ನಾಟಕ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ತವರೂರು. ಇಲ್ಲಿ ವಿವಿಧ ಧರ್ಮ , ಜಾತಿಯವರು ನೆಲೆಸಿದ್ದು, ಅನೇಕತೆಯಲ್ಲಿ ಏಕತೆಯನ್ನು ರೂಢಿಸಿಕೊಂಡು ಪ್ರೀತಿ, ದಯೆ, ಕರುಣೆ, ಸಹನೆ, ನಂಬಿಕೆ, ಭಾವೈಕ್ಯತೆ ಮುಂತಾದ ಮಾನವೀಯ ಸಂಬಂಧಗಳೊಂದಿಗೆ ಬದುಕುತ್ತಿದ್ದಾರೆ.
ಬಲ್ಲವನೆ ಬಲ್ಲ ಬೆಲ್ಲದ ಸವಿಯ ಎಂಬ ನುಡಿಯಂತೆ 12 ನೇ ಶತಮಾನ ಸರ್ವರಿಗೂ ಸಿಹಿಯನ್ನು ಉಣಬಡಿಸಿದ ಕಾಲ. ಸಕಲ ಜೀವಾತ್ಮರಿಗೆ ಲೇಸನ್ನು ಬಯಸಿ ಸಮಾಜದಲ್ಲಿ ಸಾಮರಸ್ಯ ಮೂಡಿಸಿದವರು ವಚನಕಾರರು. ವಿಶ್ವಗುರು ಬಸವೇಶ್ವರರ ಅನುಭವ ಮಂಟಪದ ಅನೇಕ ಕಾಯಕ ಮಣಿಗಳಲ್ಲಿ ಚಂದಯ್ಯನವರ ಹೆಸರು ಸ್ಮರಣೀಯ.
ಆರ್.ನುಲೇನೂರು ವಚನಕಾರ ನುಲಿಯ ಚಂದಯ್ಯ ಲಿಂಗೈಕ್ಯರಾದ ಪುಣ್ಯಭೂಮಿ. ಶಿವಶರಣ ಚಂದಯ್ಯನವರು ಇಲ್ಲಿ ನೆಲೆಸಿದ್ದರಿಂದ ಮತ್ತು ಹಗ್ಗ ನುಲಿಯುವ (ಹೊಸೆಯುವ) ಕಾಯಕ ಮಾಡುತ್ತಿದ್ದುದರಿಂದ ನುಲಿಯಯ್ಯನೂರು, ನುಲಿಯನೂರು, ನುಲೇನೂರು ಎಂಬ ಹೆಸರು ಬಂದಿದೆ. ರಾಮಗಿರಿ ಸಮೀಪವಿರುವುದರಿಂದ ಆರ್ ನುಲೇನೂರು ಎಂದು ಕರೆಯಲಾಗುತ್ತದೆ. ಕಾಯಕವನ್ನೇ ತನ್ನ ಉಸಿರಾಗಿಸಿಕೊಂಡು ಸಮಾಜಕ್ಕೆ ಕರ್ತವ್ಯ ಪ್ರಜ್ಞೆ ಸಾರಿದ ಚಂದಯ್ಯನವರು ಕಾಯಕ ದಾಸೋಹದ ಮೂಲಕ ಮನುಕುಲಕ್ಕೆ ಬೆಳಕು ನೀಡಿದ ಮಹಾ ಶಿವಶರಣ.
“ಗುರುವಾದರೂ ಕಾಯಕದಿಂದಲೇ ಜೀವನ್ಮುಕ್ತಿ ಲಿಂಗವಾದರೂ ಕಾಯಕದಿಂದಲೇ ಶಿಲೆಯ ಕುರುಹು ಹರಿವುದು
ಜಂಗಮವಾದರೂ ಕಾಯಕದಿಂದಲೇ ತನ್ನ ವೇಷದ ಪಾಶ ಹರಿವುದು
ಗುರುವಾದರೂ ಚರಸೇವೆಯ ಮಾಡಬೇಕು
ಲಿಂಗವಾದರೂ ಚರಸೇವೆಯ ಮಾಡಬೇಕು
ಜಂಗಮವಾದರೂ ಚರಸೇವೆಯ ಮಾಡಬೇಕು
ಇದು ಚಂದೇಶ್ವರ ಲಿಂಗದರಿವು ಕೇಳಾ ಪ್ರಭುವೇ”
ನುಲಿಯ ಚಂದಯ್ಯನವರ ಇದೊಂದು ವಚನ ಕಾಯಕದ ಮಹತ್ವವನ್ನು ತಿಳಿಸುತ್ತದೆ.
ವಿಜಯಪುರ ಜಿಲ್ಲೆಯ ಶಿವಣಗಿ ಎಂಬ ಗ್ರಾಮದಲ್ಲಿ ಜನಿಸಿದ ಚಂದಯ್ಯನವರು ಹೊಡಕೆ ಹುಲ್ಲನ್ನು ತಂದು ಹಗ್ಗ ಹೊಸೆಯುವ ಕಾಯಕವನ್ನು ನಡೆಸಿ ಅದರಿಂದ ಬಂದ ಹಣವನ್ನು ಗುರು – ಲಿಂಗ – ಜಂಗಮಕ್ಕೆ ಅರ್ಪಿಸುತ್ತಿದ್ದರು. ಕಾಯಕ ಭಾವ ಶುದ್ಧವಾಗಿರಬೇಕು. ಜಂಗಮ ದಾಸೋಹವು ನಿಜವಾದ ಶಿವಪೂಜೆ ಎನ್ನುವುದು ಅವರ ನಿಲುವಾಗಿತ್ತು.
ಕಲ್ಯಾಣದಲ್ಲಿ ಕ್ರಾಂತಿಯಾದಾಗ ನುಲಿಯ ಚಂದಯ್ಯನವರು ಉಳವಿ, ಶಿವಮೊಗ್ಗ, ಎಣ್ಣೆಹೊಳೆ, ನಂದಿಗ್ರಾಮ, ಶಾಂತಿಸಾಗರ, ಬೆಂಕಿಕೆರೆ ಮೂಲಕ ದುಮ್ಮಿಗೆ ಬಂದು ನೆಲೆಸುತ್ತಾರೆ. ಅಲ್ಲಿನ ಪಾಳೆಗಾರ ದುಮ್ಮಣ್ಣನಾಯಕನ ಪರಿಚಯವಾಗುತ್ತದೆ. ನಾಯಕನ ರಾಣಿ ಪದ್ಮಾವತಿ ಚಂದಯ್ಯನ ವಿಚಾರಧಾರೆಗಳಿಗೆ ಮನ:ಪರಿವರ್ತಿತಳಾಗಿ ಲಿಂಗವಂತ ಧರ್ಮದ ದೀಕ್ಷೆಯನ್ನು ಪಡೆದು ಅರಮನೆಯಲ್ಲಿ ಆಶ್ರಯವನ್ನು ನೀಡುತ್ತಾಳೆ.
ಅರಮನೆಯ ವಾತಾವರಣ ಶರಣ ಸಂಸ್ಕೃತಿಗೆ ಹೊಂದಿಕೆಯಾಗದ ಕಾರಣ ಪದ್ಮಾವತಿಯು ತನ್ನ ತವರೂರಾದ ಆರ್.ನುಲೇನೂರಿಗೆ(ಪದ್ಮಾವತಿ ಪಟ್ಟಣ)ಆಹ್ವಾನಿಸುತ್ತಾಳೆ. ನಂತರ ಅಲ್ಲೊಂದು ಶಿಲಾಮಂಟಪ ನಿರ್ಮಿಸಿ ನಿತ್ಯಕಾಯಕ ದಾಸೋಹಕ್ಕೆ ಹಾಗೂ ಅನುಭಾವ ಗೋಷ್ಠಿ ನಡೆಸಲು ಅವಕಾಶ ಕಲ್ಪಿಸುತ್ತಾಳೆ. ಚಂದಯ್ಯನವರು ಬದುಕಿನ ಕೊನೆಯವರೆಗೆ ಇದೇ ಗ್ರಾಮದಲ್ಲಿ ನೆಲೆಸಿದ್ದು ತಮ್ಮ ಇಷ್ಟಲಿಂಗ ಚಂದೇಶ್ವರ ಲಿಂಗದಲ್ಲಿ ಒಂದಾದರು ಎಂದು ಪ್ರತೀತಿ ಇದೆ.
ಚಂದಯ್ಯನವರ ಬಗ್ಗೆ ಅನೇಕ ಕಥೆಗಳು ಪ್ರಚಲಿತದಲ್ಲಿವೆ. ಒಮ್ಮೆ ಹೊಡಕೆ ಹುಲ್ಲು ಕೊಯ್ಯುವಾಗ ಚಂದಯ್ಯನವರ ಕೊರಳಲ್ಲಿದ್ದ ಇಷ್ಟಲಿಂಗವು ಜಾರಿ ನೀರಲ್ಲಿ ಬಿದ್ದಿತು. ಲಿಂಗವನ್ನು ಲೆಕ್ಕಿಸದೆ ಅವರು ಹಾಗೆ ಹೊರಟುಬಿಟ್ಟರು. ಲಿಂಗವು ತನ್ನನ್ನು ಸ್ವೀಕರಿಸಬೇಕೆಂದು ಅಂಗಲಾಚಿ ಕೇಳಿಕೊಂಡರೂ ಅದನ್ನು ಗಮನಿಸದೆ, ನನಗೆ ನಿನಗಿಂತ ಜಂಗಮಾರಾಧನೆ ಮುಖ್ಯ ಎಂದು ಹೇಳಿ ಕಾಯಕದಲ್ಲಿ ನಿರತರಾದರು. ಕೊನೆಗೆ ಮಡಿವಾಳ ಮಾಚಯ್ಯನವರ ಸಂಧಾನದಿಂದ ಲಿಂಗವನ್ನು ಸ್ವೀಕರಿಸಿದರು. ಇವರ ಕಾಯಕ ಪ್ರಜ್ಞೆ ಎಷ್ಟಿತ್ತು ಎಂಬುದಕ್ಕೆ ಈ ಘಟನೆ ನಿದರ್ಶನ.
ಒಮ್ಮೆ ಕೆರೆಯ ನೀರನ್ನು ಬಳಸುವ ವಿಷಯದಲ್ಲಿ ಗ್ರಾಮದ ಕೆಲವರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಚಂದಯ್ಯ ಕೆರೆಯ ದಡದ ಬಳಿ ಬೆತ್ತದಿಂದ ನೆಲ ಮುಟ್ಟಿದಾಗ ಬಾವಿ ಸೃಷ್ಠಿಯಾಗಿ ನೀರು ಉಕ್ಕಿತು. ಇದೇ ಬಾವಿಯ ನೀರನ್ನು ಪೂಜಾಕಾರ್ಯಗಳಿಗೆ ಬಳಸುತ್ತಿದ್ದರು. ಇಂದಿಗೂ ಕೆರೆಯ ಪಕ್ಕದಲ್ಲಿ ಈ ಬಾವಿಯಿದ್ದು ಚಂದಯ್ಯನ ಬಾವಿ ಎಂದೇ ಪ್ರಸಿದ್ದಿಯಾಗಿದೆ.
ಕಾಯಕವು ಅಂತರಂಗ ಬಹಿರಂಗ ಶುದ್ಧಿಗೆ ಸೋಪಾನ. ಕಾಯಕವು ನಮ್ಮ ನಿತ್ಯಬದುಕಿನಲ್ಲಿ ನಿತ್ಯ ಕಾಯದ ಮೂಲಕವಾಗಿ ನಡೆಯುವ ಧ್ಯಾನ. ಶರಣರ ಕಾಯಕದಲ್ಲಿ ಕೇವಲ ಧನಕ್ಕೆ ಪ್ರಾಶಸ್ತ್ಯವಿರದೆ ಅದರ ಸತ್ಪಾತ್ರತೆಗೆ ಪ್ರಾಶಸ್ತ್ಯವಿತ್ತು. ಕಾಯಕದ ಉದ್ದೇಶ ಗುರು-ಲಿಂಗ-ಜಂಗಮ ದಾಸೋಹಕ್ಕೆ ಆದರೆ ತ್ರಿವಿಧ ದಾಸೋಹಕ್ಕೆ ನೈವೇದ್ಯವಾಗಬಲ್ಲ ದ್ರವ್ಯ ಪದಾರ್ಥ ‘ಸತ್ಯ ಶುದ್ಧ ಕಾಯಕದ ‘ ಪ್ರತಿನಿತ್ಯದ ದ್ರವ್ಯವೇ ಆಗಿರಬೇಕು ಎಂಬ ನಿಲುವು ಚಂದಯ್ಯನವರದು. ಸತ್ಯ ಶುದ್ಧ ಕಾಯಕದಲ್ಲಿ ನಿರತರಾಗಿ ಸಾರ್ಥಕ ಬದುಕನ್ನು ನಡೆಸಿದ ಕಾಯಕಯೋಗಿ ಚಂದಯ್ಯನವರು ಲಿಂಗೈಕ್ಯರಾದ ಸ್ಥಳವನ್ನು 1956ರಲ್ಲಿ ಜೀರ್ಣೋದ್ದಾರ ಮಾಡಲಾಗಿದೆ. ಪ್ರಾಚ್ಯವಸ್ತು ಪುರಾತತ್ವ ಇಲಾಖೆಯ ವತಿಯಿಂದ 38 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸಲಾಗಿದೆ.
ಜೂನ್ 29 ರಂದು ಪೂಜ್ಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಕಾಯಕಯೋಗಿ ಶರಣ ನುಲಿಯ ಚಂದಯ್ಯನವರ ಸ್ಮರಣೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಸಮಾಜದಲ್ಲಿದ್ದ ಅಂಧಕಾರ, ಮೂಢನಂಬಿಕೆ ಜಾತಿ ಬೇಧ ದೂರಮಾಡಿ ಸದ್ಬುದ್ಧಿ, ಸದಾಚಾರ, ಸಹಬಾಳ್ವೆ ಮುಂತಾದ ಮಾನವೀಯ ಗುಣಗಳನ್ನು ಬಿತ್ತಿ ಸಮಸಮಾಜ ನಿರ್ಮಿಸಿದ ಶರಣರ ದೃಷ್ಟಿಕೋನದಂತೆ ತಾಲೂಕು ಸಾಧು ವೀರಶೈವ ಸಂಘ(ರಿ) ಶ್ರೀ ತರಳಬಾಳು ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ಹೊಳಲ್ಕೆರೆ.
ಸಮಸ್ತ ಗ್ರಾಮಸ್ಥರು ಆರ್.ನುಲೇನೂರು ಇವರ ಸಂಯುಕ್ತಾಶ್ರಯದಲ್ಲಿ ವರ್ಗ, ಲಿಂಗಬೇಧವಿಲ್ಲದೆ ಚಂದಯ್ಯನವರ ಸ್ಮರಣೋತ್ಸವ ಮತ್ತು ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವುದರ ಮೂಲಕ ಕಾಯಕ ಯೋಗಿಗೆ ಗೌರವ ಸಲ್ಲಿಸಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243