Connect with us

ದಿನದ ಸುದ್ದಿ

ಕಿಮ್ ಕಿ ಡುಕ್; ಎಣ್ಣೆ ತೀರಿದ ಏಷಿಯಾದ ವಿಕ್ಷಿಪ್ತ ಹಣತೆ

Published

on

  • ಡಾ.ನೆಲ್ಲುಕುಂಟೆ ವೆಂಕಟೇಶ್

ಳೆದ ದಕ್ಷಿಣ ಕೊರಿಯಾದ ನಿರ್ದೇಶಕ ಕಿಮ್ ಕಿ ಡುಕ್ ಲಾಟ್ವಿಯಾದ ಆಸ್ಪತ್ರೆಯೊಂದರಲ್ಲಿ ಮರಣ ಹೊಂದಿದ. ಕೊರೋನ ವೈರಸ್ಸು ಈತನನ್ನು ತಿಂದು ಹಾಕಿದೆ. ಕಿಮ್ ಸಾವು ಜಗತ್ತಿನ ಗಂಭೀರ ಸಿನಿಮಾಸಕ್ತರನ್ನು ಕಾಡಿದಂತೆ ನಮ್ಮನ್ನು ಕಾಡಲಿಲ್ಲ. ಕಡೇ ಪಕ್ಷ ಕೇರಳವನ್ನು ಕಾಡಿದಷ್ಟೂ ಕಾಡಲಿಲ್ಲ. ಕೇರಳ ಮನೆ ಮಗನನ್ನು ಕಳೆದುಕೊಂಡ ಹಾಗೆ ಸ್ಪಂದಿಸಿದೆ. [ಮಲಯಾಳಂಗೆ ಆತನ ಬಹುಪಾಲು ಸಿನಿಮಾಗಳು ಡಬ್ ಆಗಿವೆ. ಅಲ್ಲಿ ಅವನ ಸಿನಿಮಾ ಉತ್ಸವಗಳೂ ನಡೆದಿವೆ}.

ಅವನ ಸಾವಿನ ಕುರಿತು ಕನ್ನಡದ ಸೋಷಿಯಲ್ ಮೀಡಿಯಾದಲ್ಲಿ ತುಸು ಸದ್ದು ಮಾಡಿದ್ದು ಬಿಟ್ಟರೆ ಹೆಚ್ಚೇನೂ ಚರ್ಚೆಯಾಗಲಿಲ್ಲ. ಎಂದಿನಂತೆ ಕರ್ನಾಟಕದ ಸಿನಿಮಾ ಜನ ತಣ್ಣಗೆ ಪ್ರತಿಕ್ರಿಯಿಸಿದರು. ಬಹಳ ಜನ ಕನ್ನಡ ಸಿನಿಮಾದವರಿಗೆ ಈತ ಗೊತ್ತಿದ್ದನೋ ಇಲ್ಲವೋ ತಿಳಿಯದು. ಕನ್ನಡ ಬಾಲಿವುಡ್ಡನ್ನು ಮಾದರಿಯಾಗಿಟ್ಟುಕೊಂಡು ಸಿನಿಮಾ ಮಾಡಲು ಪ್ರಯತ್ನಿಸುತ್ತಿದೆ. ಮಲೆಯಾಳಂಗೆ ಇರುವ ಡಯಸ್ಪೋರಾ ಗುಣದಿಂದಾಗಿ ಅವರನ್ನು ಜಗದ ಜತೆ ಸಂವಾದ ಮಾಡುವ ಮಾಂತ್ರಿಕರನ್ನಾಗಿಸಿದೆ.

ಮಲೆಯಾಳಿಗರು ಮನುಷ್ಯನ ಆಳದ ಇಂಪಲ್ಸಿವ್ ಗುಣಗಳನ್ನು ಹಿಡಿದು ಯೂನಿವರ್ಸಲ್ ಆಗಬಹುದಾದ ಸಿನಿಮಾಗಳನ್ನು ಕಟ್ಟುತ್ತಿದ್ದಾರೆ. ಕನ್ನಡಕ್ಕೆ ಇದು ಯಾಕೊ ಸಾಧ್ಯವಾಗಿಲ್ಲ. ನಮ್ಮಲ್ಲಿ ಯೂನಿಫಾರ್ಮಿಟಿಯ ಫ್ರೇಮಿನಲ್ಲಿಟ್ಟ ಪ್ರೇಮ, ಜೋಕುಗಳು, ಅಂತರಂಗವೇ ಇಲ್ಲದಂತೆ ಕಾಣುವ ಇಟ್ಟಿಗೆ, ಜಲ್ಲಿಯಂಥ ವಿಲನ್‍ಗಳು, ಅವರ ರಕ್ತಪಾತಗಳು ಇವುಗಳನ್ನು ಪದೇ ಪದೇ ತಿರುಗಿಸಿ ಸೂಕ್ಷ್ಮತೆಯುಳ್ಳವರನ್ನು ಸಿನಿಮಾಗಳತ್ತ ನೋಡದ ಹಾಗೆ ಮಾಡಲಾಗಿದೆ.

ಹಿಂಸೆಯಲ್ಲಿ ರಣ ಹಿಂಸೆ ತೋರಿಸುವ ಸಿನಿಮಾ ದುಡ್ಡು ಮಾಡುತ್ತದೆ ಎಂಬ ಸೂತ್ರವೇನೋ ಇವರಿಗೆ ಸಿಕ್ಕಿಬಿಟ್ಟಂತಿದೆ. ಇದು ನೋಡುಗರ ಸಮಸ್ಯೆಯೋ ಇಲ್ಲ ಸಿನಿಮಾ ಮಾಡುವವರ ಸಮಸ್ಯೆಯೋ ತಿಳಿಯದು. ಇಬ್ಬರೂ ಒಬ್ಬರತ್ತ ಒಬ್ಬರು ಮಾತ್ರ ಕೈ ತೋರಿಸಿಕೊಂಡು ಕೂತಿದ್ದಾರೆ. ಇದೆಲ್ಲದರ ನಡುವೆ ಕನ್ನಡ ತೆಳುವಾಗುತ್ತಿದೆ. ಆಧುನಿಕ ಸಂದರ್ಭದಲ್ಲಿ ಆಹಾರ ಸಂಸ್ಕೃತಿ, ಸಿನಿಮಾ, ಸಂಗೀತ ಸಂಸ್ಕøತಿಗಳು ಭಾಷೆಯನ್ನು ಮತ್ತು ಸಂಸ್ಕೃತಿಯನ್ನು ವಿಸ್ತರಿಸಲು ಕಾರಣವಾಗುತ್ತಿವೆ. ನಾವು ಇದನ್ನು ಮರೆತಂತೆ ವರ್ತಿಸುತ್ತಿದ್ದೇವೆ.

ಕನ್ನಡದ ಕಲಾತ್ಮಕ ಸಿನಿಮಾಗಳೂ ಸಹ ನನ್ನನ್ನು ಕಾಡಿದ್ದಿಲ್ಲ. ಅವು ಡಾಕ್ಯುಮೆಂಟರಿ ಲೆವೆಲ್ಲಿನಿಂದ ಮೇಲೆದ್ದ ಹಾಗೆ ಕಂಡೇ ಇಲ್ಲ. ಇಷ್ಟಕ್ಕೂ ಸಿನಿಮಾವನ್ನು ಕಲಾತ್ಮಕ, ಕಮರ್ಷಿಯಲ್ ಎಂದು ವಿಂಗಡಿಸುವುದೇ ತಪ್ಪಲ್ಲವೇ? ಕಲಾತ್ಮಕ ಸಿನಿಮಾ ಒಂದನ್ನು ಜನ ನೋಡದಿದ್ದರೆ, ತಿಂದ ಬಂಡವಾಳವನ್ನು ಅದು ವಾಪಸ್ಸು ನೀಡದಿದ್ದರೆ ಅಂಥ ಸಿನಿಮಾವನ್ನು ಯಾಕೆ ಮಾಡಬೇಕು? ಕಮರ್ಷಿಯಲ್ ಚಿತ್ರಕ್ಕೆ ಕಲೆಯ ಸ್ಪರ್ಶವೇ ಇಲ್ಲದಿದ್ದರೆ ಅದೂ ಸಹ ಹುಸಿಯಾದ ರಚನೆಯೇ ಅಲ್ಲವೇ?

ಒಳ್ಳೆಯತನ ಮತ್ತು ಕೆಟ್ಟತನಗಳನ್ನು ಸರಳ ರೇಖೆಗಳಲ್ಲಿ ಇರಿಸಿ ನೋಡುವ ಚಾಳಿಯೊಂದು ಕನ್ನಡವನ್ನು ಆವರಿಸಿಕೊಂಡು ಕೂತಿದೆ. ನಾಯಕನಾದವನು ಹೀಗೆ ಇರಬೇಕು ಎಂಬ ಫಾರ್ಮುಲಾವನ್ನು ಅಚ್ಚು ಕಟ್ಟಾಗಿ ಪಾಲಿಸಲಾಗುತ್ತದೆ. ರಾಮನೊಳಗೂ, ಕೃಷ್ಣನೊಳಗೂ ಅಸಂಖ್ಯಾತ ಓರೆ ಕೋರೆಗಳಿದ್ದವು ಎಂದು ವ್ಯಾಸ, ವಾಲ್ಮೀಕಿಯರು ತೋರಿಸುತ್ತಾರೆ. ಮನುಷ್ಯನಾಗುವುದೆಂದರೆ ಮೃಗೀಯತೆಯಿಂದ ಬಿಡುಗಡೆ ಪಡೆಯುವುದೆಂದು ಅರ್ಥ.

ತಂದೆ ಆ ಮೃಗತ್ವದಿಂದ ಬಿಡುಗಡೆ ಪಡೆದಿದ್ದ ಎಂದರೆ ಮಗನಿಗೆ ಮನುಷ್ಯತ್ವ ಬಂದು ಬಿಡುತ್ತದೆ ಎಂದಲ್ಲ. ಮಗನೂ ಸಂಘರ್ಷ ಮಾಡಿಯೇ ಬದುಕಬೇಕು. ಈ ತಾಕಲಾಟಗಳೇ ಮನಶ್ಯಾಸ್ತ್ರದ ಮೂಲ ತಾಕುಗಳು. ಬುಡಕಟ್ಟು, ನಾಗರಿಕತೆ, ರಾಷ್ಟ್ರಗಳಿಗೂ ಇಂಪಲ್ಸಿವ್ ಕ್ಯಾರೆಕ್ಟರ್ ಇರುತ್ತದೆ. ಪ್ರೇಮ, ಕಾಮ, ಧರ್ಮದ ಸ್ಥಗಿತ ಮೌಲ್ಯಗಳು, ಜಾತಿ, ವರ್ಗಗಳ ದಮನಕಾರಿ ಗುಣಗಳು ರಾಷ್ಟ್ರದ ಶ್ರೇಷ್ಠತೆಯ ಸಮಸ್ಯೆಗಳು. ಹಿಂಸೆ, ಶಾಂತಿ ಕುರಿತಾದ ಹಂಬಲ, ಪ್ರೀತಿ ಕುರಿತ ದಾಹ ಇವೆಲ್ಲ ಮನುಷ್ಯರನ್ನು ನಿರಂತರ ಕಾಡುತ್ತಲೇ ಇವೆ. ಕಂಗೆಡಿಸುತ್ತಲೇ ಇವೆ. ನಾಯಕನೊಳಗೊಳಗೊಬ್ಬ ಖಳ. ಖಳನೊಳಗೊಬ್ಬ ಮನುಷ್ಯನಿರಲು ಸಾಧ್ಯ ಎಂದು ಪಂಪ ರನ್ನರ ಕಾಲದಲ್ಲೇ ಕನ್ನಡವು ಚಿಂತಿಸಿದೆ.

ಕನ್ನಡದ ಸಿನಿಮಾಗಳು ನಡುಗಿಸುವಂತಹ, ಮುಟ್ಟಿ ನೋಡಿಕೊಳ್ಳುವಂತಹ, ಕಾಡುವಂತಹ ಇಂಪಲ್ಸಿವ್ ಕ್ಯಾರೆಕ್ಟರ್‍ಗಳನ್ನು ಸೃಷ್ಟಿಸಿದೆಯೇ? ಎಂಬುದನ್ನು ಕೇಳಿಕೊಳ್ಳಲು ಸಕಾಲ ಇದು. ಪಕ್ಕದ ಮಲಯಾಳಂ ಸಿನಿಮಾಗಳ ಮೂಲಕ ವಿಶ್ವಸ್ಥ ವ್ಯಾಕರಣವನ್ನು ಹಿಡಿದು, ಸ್ಥಳೀಯ ರಂಗು ಬಳಿದುಕೊಂಡು ನರ್ತಿಸುತ್ತಿದೆ. ತಮಿಳಿನಲ್ಲೂ ಪ್ರಧಾನ ಧಾರೆಯ ದೃಷ್ಟಿಕೋನವನ್ನು ಭಂಗಿಸುವ ಸಿನಿಮಾಗಳು ಆಗಾಗ ಬರುತ್ತಿವೆ.

ಕನ್ನಡ ಸಿನಿಮಾಗಳ ಪ್ರಗತಿಪರತೆ ಜಾತಿ, ಧರ್ಮ ಮೀರಿ ಪ್ರೀತಿ ಮಾಡುವುದು, ಪಾಠ ಮಾಡುವ ಮೇಷ್ಟ್ರುಗಳನ್ನು ಜೋಕರುಗಳಾಗಿ ಚಿತ್ರಿಸುವುದು, ಆಡಳಿತಶಾಹಿಯನ್ನು ಕೆಟ್ಟದಾಗಿ ಬಯ್ಯುವುದು, ಬಡವನೊಬ್ಬ ವೇಗವಾಗಿ ಶ್ರೀಮಂತನಾಗುವುದು, ರೌಡಿಯಾದರೂ ಒಳ್ಳೆಯ ಕಾರಣಕ್ಕೆ ಇತರರನ್ನು ಕೊಲ್ಲುವುದು ಮುಂತಾದ ಕತೆಗಳಾಚೆಗೆ ಹೋಗಿದ್ದು ಬಹಳ ಕಡಿಮೆ. ವಾಸ್ತವವಲ್ಲದ ಹುಸಿಯ ಬಣ್ಣವನ್ನು ಜನರ ಮೆದುಳ ಮೇಲೆ ತೇಲಿಸಲಾಗುತ್ತಿದೆ.

ಕಿಮ್ ಕಿ ಡುಕ್ ಸಾವು ಇದನ್ನೆಲ್ಲ ನೆನಪಿಸಿತು. ಕಿಮ್ ವಿಪರೀತ ವಿಕ್ಷಿಪ್ತ ಮನಸ್ಸಿನ ಮನುಷ್ಯ. ದಕ್ಷಿಣ ಕೊರಿಯಾದ ಗ್ಯೊಂಗ್ ಸ್ಯಾಂಗ್ ಪ್ರದೇಶದಲ್ಲಿ ಹುಟ್ಟಿ ಸಿಯೋಲ್‍ನ ಕಾರ್ಖಾನೆಯೊಂದರಲ್ಲಿ ಕಾರ್ಮಿಕನಾಗಿ ದುಡಿದ. ಅಲ್ಲಿಂದ ಪ್ಯಾರಿಸ್ಸಿಗೆ ಹೋಗಿ ಬೀದಿಗಳಲ್ಲಿ ಪೈಂಟಿಂಗ್ ಮಾಡುತ್ತಾ ಅಲ್ಲಿನ ಕಲೆಯ ಅಭಿವ್ಯಕ್ತಿ ವಿಧಾನಗಳನ್ನು ಆಳವಾಗಿ ಗಮನಿಸತೊಡಗಿದ.

ನಿಧಾನಕ್ಕೆ ಸಿನಿಮಾ ಕಡೆಗೆ ನಡೆದ. 1996 ರಲ್ಲಿ ಕ್ರೊಕೋಡೈಲ್ ಸಿನಿಮಾ ಮಾಡಿದ. ಬುದ್ಧಿಸ್ಟ್ ದೇಶವಾದ ದಕ್ಷಿಣ ಕೊರಿಯಾದಲ್ಲಿ ಈತನ ಸಿನಿಮಾಗಳ ಬೆಚ್ಚಿ ಬೀಳಿಸುವ ಗುಣ, ಅತಿ ಎನ್ನಿಸುವ ಒರಟುತನ, ಹಸಿ ಹಸಿಯಾದ ಮನುಷ್ಯರ ವಾಂಛೆಗಳು ಮೀಡಿಯಾಗಳ, ಪಂಡಿತರ ಗಮನ ಸೆಳೆಯಲಿಲ್ಲ. ಸಿಟ್ಟಿಗೆದ್ದ ಕಿಮ್ ತನ್ನ ದೇಶದಲ್ಲಿ ಸಿನಿಮಾ ಬಿಡುಗಡೆ ಮಾಡುವುದಿಲ್ಲವೆಂದು ಹಠ ಮಾಡಿದ.

ಕಿಮ್‍ನ ಸಿನಿಮಾ ‘ ದ ನೆಟ್’ ಅನ್ನು ನಾನು 2017 ರಲ್ಲಿ ಬೆಂಗಳೂರಿನಲ್ಲಿ ನಡೆದ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಮೊದಲ ಬಾರಿಗೆ ನೋಡಿದೆ. ಆ ಸಿನಿಮಾ ವಿಶ್ವಾತ್ಮಕವಾದವನ್ನು ಪ್ರತಿಪಾದಿಸುತ್ತಿದ್ದ ಜಗತ್ತಿನ ಅನೇಕ ಚಿಂತಕರನ್ನು ನೆನಪಿಸಿತು. ಮನುಷ್ಯನ ಒಳ್ಳೆಯದಕ್ಕೆಂದು ನಿರ್ಮಾಣವಾದ ರಾಷ್ಟ್ರವೆಂಬ ಆಧುನಿಕ ರಾಜಕೀಯ ಸಂರಚನೆಯು ಭೀತಿಕಾರಕ ಮತ್ತು ಹಿಂಸ್ರಕವೆಂದು ಆ ಸಿನಿಮಾ ವಿವರಿಸುತ್ತದೆ.

ನೆಟ್ ಸಿನಿಮಾ ನೋಡಿದ ನಂತರ ಅವನ ಉಳಿದ ಸಿನಿಮಾಗಳನ್ನು ಹುಡುಕಿ ಹುಡುಕಿ ನೋಡತೋಡಗಿದೆ. ಕೆಲವು ಸಿನಿಮಾಗಳು ವಿಕ್ಷಿಪ್ತ ಅನ್ನಿಸಿದರೆ ಕೆಲವು ಮನುಷ್ಯನ ನಾಭಿಯಾಳದ ಸಂಕಟದಿಂದ ಎದ್ದು ಬರುತ್ತಿವೆ ಅನ್ನಿಸಿದವು. ನನ್ನನ್ನು ಬಹಳ ಕಾಡಿದ ಸಿನಿಮಾಗಳು ಮೂರು; ದ ನೆಟ್, 3 ಐರನ್ ಮತ್ತು ಸ್ಪ್ರಿಂಗ್, ಸಮ್ಮರ್, ಫಾಲ್ ವಿಂಟರ್ ಅಂಡ್ ಸ್ಪ್ರಿಂಗ್. ಸಿನಿಮಾ ನೋಡಿ ಬಹಳ ಕಾಲವಾದರೂ ಅದರ ಗುಂಗಿನಿಂದ ಹೊರಬರಲಾಗದಂತೆ ಈ ಸಿನಿಮಾಗಳು ಕಾಡುತ್ತಿವೆ.

ಅತ್ಯುತ್ತಮ ಕಲಾಕೃತಿಯೊಂದು ಸದಾ ತನ್ನನ್ನು ಬಂಧಿಸುವ ಫಾರ್ಮ್ ಅನ್ನು ಮುರಿಯಲು ಪ್ರಯತ್ನಿಸುತ್ತಿರುತ್ತದೆ. ಸಿನಿಮಾ, ಪೈಂಟಿಂಗ್, ಕತೆ, ಪದ್ಯ, ಕಾದಂಬರಿ, ನಾಟಕ ಎಲ್ಲವೂ ಹಾಗೆಯೇ. ಫಾರ್ಮಿನ ಬಂಧನದಿಂದ ಬಿಡಿಸಿಕೊಳ್ಳದೆ ಇದ್ದರೆ ಅಂತಹ ಕಲಾಕೃತಿ ಕೃತಕ ಅನ್ನಿಸಲಾರಂಭಿಸುತ್ತದೆ. ಕಾಲ, ದೇಶಗಳ ಹಂಗು ಮೀರಿ ಕತೆ, ಕಲಾಕೃತಿಯು ಮನುಷ್ಯರೆಲ್ಲರ ಸಂಕಟ, ತೊಳಲಾಟ ಅನ್ನಿಸತೊಡಗಿದರೆ ಮಾತ್ರ ಬದುಕಿನ ಕತೆಯಾಗುತ್ತದೆ. ಕಿಮ್ ನ ಸಿನಿಮಾಗಳು ಅಂತಹ ದಿಗಂತದ ಕಡೆಗೆ ಏರಲು ಯತ್ನಿಸುತ್ತವೆ.

ಕುರಸೋವಾನ ನಂತರ ಪಶ್ಚಿಮದ ಜಗತ್ತು ಏಷ್ಯಾದ ಕಡೆಗೆ ತಿರುಗಿ ನೋಡಿದ್ದು ಒಂದರ್ಥದಲ್ಲಿ ಕಿಮ್ ಕಿ ಡುಕ್ ಕಾರಣದಿಂದಾಗಿ. (ಭಾರತದಲ್ಲಿ ಸತ್ಯಜಿತ್ ರೇ ಮತ್ತು ಅಮೀರ್ ಖಾನ್ ಒಂದಿಷ್ಟು ಸೆಳೆವ ಕೆಲಸ ಮಾಡಿದ್ದಾರೆ).ಇರಾನಿನ ಮಜೀದ್ ಮಜೀದಿಯೂ ಈ ಕ್ಷೇತ್ರದಲ್ಲಿ ಗಮನಾರ್ಹ ಕೆಲಸ ಮಾಡಿದ್ದಾನೆ. ಕಿಮ್ ಗಿಂತ ಒಂದು ವರ್ಷ ದೊಡ್ಡನಾದ ಮಜೀದಿ ಮಕ್ಕಳ ಮೂಲಕ ಮನುಷ್ಯರ ಸಂಕಟಗಳನ್ನು ಹೇಳಲು ಪ್ರಯತ್ನಿಸುತ್ತಾನೆ.

ಮಜೀದಿಯ ‘ಚಿಲ್ಡ್ರನ್ ಆಫ್ ಹೆವನ್’, ‘ದ ಕಲರ್ ಆಫ್ ಪ್ಯಾರಡೈಸ್’ ಗಮನಾರ್ಹ ಕಲಾಕೃತಿಗಳು. ಸಿನಿಮಾಗಳ ಮೂಲಕ ವiಜೀದಿ ಇರಾನಿನ ಗ್ರಾಮೀಣ ಕೃಷಿ ಕುಟುಂಬಗಳ ಕಣ್ಣೀರು, ಸಂಕಟ, ಪ್ರೇಮ ಮತ್ತು ಮನುಷ್ಯರ ನವಿರುತನಗಳನ್ನು ಹೆಕ್ಕಿ ತರಲು ಪ್ರಯತ್ನಿಸುತ್ತಾನೆ. ಮಕ್ಕಳನ್ನು ದೇವರ ಪ್ರತಿನಿಧಿಗಳೆಂದು ಗ್ರಹಿಸುತ್ತಾನೆ.

ಕಿಮ್ ಮಜೀದಿಯ ಹಾಗೆ ಬೇಗ ಆರ್ದ್ರಗೊಳ್ಳುವ ಮನುಷ್ಯನಲ್ಲ. ಆತ ಒಂದರ್ಥದಲ್ಲಿ ದೇವರ ವಿರುದ್ಧವೇ ದಂಗೆ ಏಳುವ ಮನುಷ್ಯ. ಅವನ ಸ್ಪ್ರಿಂಗ್ ಸಮ್ಮರ್… ಸಿನಿಮಾ ಒಂದರ್ಥದಲ್ಲಿ ಬುದ್ಧನ ವಿರುದ್ಧ ದಂಗೆ ಏಳುವ ಸಿನಿಮಾ. ಮಹಾಯಾನಿ ಬೌದ್ಧಗುರು ಮತ್ತು ಶಿಷ್ಯನ ನಡುವೆ ನಡೆವ ಈ ಕತೆ ಚಕ್ರಗತಿ ಸಿದ್ಧಾಂತವನ್ನು ಪ್ರತಿಪಾದಿಸುತ್ತದೆ. ಮುಖ್ಯವಾಗಿ ಅದು ಎರಡು ತತ್ವಗಳನ್ನು ಪ್ರತಿಪಾದಿಸುತ್ತದೆ.

ಒಂದು, “ಕಾಮವು ತನ್ನ ತೀರದ ದಾಹದಿಂದ ಇನ್ನೊಂದು ಜೀವದ ಮೇಲೆ ಪೊಸೆಸಿವ್ ಆಗುತ್ತದೆ, ಕಡೆಗೆ ಕೊಲೆ ಮಾಡಲು ಉತ್ತೇಜಿಸುತ್ತದೆ”. ಗುರು, ಶಿಷ್ಯರು ಪ್ರಕೃತಿಯ ಏರಿಳಿತಗಳನ್ನು ನೋಡುತ್ತಾ ಸರೋವರದ ಮಧ್ಯದ ಕುಟೀರದಲ್ಲಿ ಬದುಕಿದ್ದ ನೆಲೆಗೆ ಖಿನ್ನ ಮನಸ್ಸಿನ ಕಾಯಿಲೆ ಅಂಟಿದ್ದ ಹುಡುಗಿಯೊಬ್ಬಳು ಬರುತ್ತಾಳೆ. ಶಿಷ್ಯ ಅವಳ ಮೋಹಕ್ಕೆ ಬಿದ್ದು ಅವಳೊಂದಿಗೆ ಮಲಗುತ್ತಾನೆ. ಗುರುವಿಗೆ ಗೊತ್ತಾಗುತ್ತದೆ.

ಇದು ಪುನರಾವರ್ತನೆಯಾಗುತ್ತದೆ. ಆಗ ಗುರು ಮೇಲಿನ ಮಾತನ್ನು ಶಿಷ್ಯನಿಗೆ ಹೇಳುತ್ತಾನೆ. ಗಂಡಿನ ಸ್ಪರ್ಶದಿಂದ ಹುಡುಗಿ ಗುಣಮುಖಳಾಗುತ್ತಾಳೆ. ದೈಹಿಕ ಸಂಪರ್ಕದಿಂದ ಕಾಯಿಲೆ ವಾಸಿಯಾಗುವುದಾರೆ ಅದು ಒಮ್ಮೆ ಸಾಕು ಎನ್ನುವಷ್ಟು ಪ್ರಾಕ್ಟಿಕಲ್ ಆಗಿ ಗುರು ಯೋಚಿಸುತ್ತಾನೆ.

ಆದರೆ ಅದೇ ಕಾಯಿಲೆಯಾಗಿಟ್ಟರೆ ನಾಶ ಖಂಡಿತ ಎನ್ನುವುದು ಆತನ ನಿಲುವು. ಹುಡುಗಿಯನ್ನು ಹೊರಡುವಂತೆ ಹೇಳುತ್ತಾನೆ. ಅವಳು ಹೋದ ಕೂಡಲೇ ಶಿಷ್ಯ ಭೋರೆಂದು ಗೋಳಾಡಿ ಅವಳ ಹಿಂದೆ ಹೋಗುತ್ತಾನೆ. ಕಡೆಗೊಂದು ದಿನ ವಾಪಸ್ಸು ಬರುತ್ತಾನೆ. ಪಶ್ಚಾತ್ತಾಪ, ಸಿಟ್ಟಿನಲ್ಲಿ ಭುಗಿಲೆದ್ದು ಹೇಳುತ್ತಾನೆ. ‘ ಅವಳಿಂದ ಬಯಸಿದ್ದು ಪ್ರೇಮವನ್ನು ಮಾತ್ರ. ಅವಳು ಬೇರೊಬ್ಬನೊಂದಿಗೆ ಹೊರಟು ಹೋದಳು. ಕಡೆಗೆ, ಅವಳನ್ನು ಕೊಂದು ಬಂದೆ’ ಎಂದು ನೆತ್ತರು ಒಣಗದ ಚಾಕು ತೋರಿಸುತ್ತಾನೆ.

ಎರಡು, ‘ನೀನು ಪ್ರಾಣಿಗಳಿಗೆ ಕಲ್ಲು ಕಟ್ಟಿ ಬಂದೆಯಲ್ಲ ಅವನ್ನು ಬಿಡಿಸು ಹೋಗು. ಬದುಕಿದ್ದರೆ ಬಚಾವಾದೆ, ಸತ್ತು ಹೋಗಿದ್ದಾರೆ ನಿನ್ನ ಜೀವನ ಪರ್ಯಂತ ಆ ಕಲ್ಲಗಳನ್ನು ಎದೆಯೊಳಗೆ ಹೊತ್ತುಕೊಂಡು ಓಡಾಡಬೇಕು’ ಎನ್ನುತ್ತಾನೆ. ಶಿಷ್ಯ ಆಶ್ರಮಕ್ಕೆ ಹೇಗೆ ಬಂದ ಗೊತ್ತಿಲ್ಲ. ಬಂದವನು ಆಡುತ್ತಾ ಆಡುತ್ತಾ ನೀರಿನಲ್ಲಿದ್ದ ಕಪ್ಪೆಗೆ, ಮೀನಿಗೆ, ನೀರ ಹೊರಗಿದ್ದ ಹಾವಿಗೆ ಕಲ್ಲು ಕಟ್ಟಿ ಬಿಟ್ಟು ಬರುತ್ತಾನೆ. ನೋಡಿದ ಗುರು ಮಲಗಿದ್ದ ಶಿಷ್ಯನಿಗೆ ಕಲ್ಲು ಕಟ್ಟುತ್ತಾನೆ.

ಎದ್ದು ಓಡಾಡಲಾಗದೆ ಕಲ್ಲು ಬಿಚ್ಚು ಎಂದು ಗೋಳಾಡುವ ಶಿಷ್ಯನಿಗೆ ಗುರು ಮೇಲಿನ ಮಾತುಗಳನ್ನು ಹೇಳುತ್ತಾನೆ. ನೋಡಿದರೆ ಹಾವು ಮೀನುಗಳೆರಡೂ ಸತ್ತು ಹೋಗಿರುತ್ತವೆ. ಕಪ್ಪೆ ಬದುಕಿರುತ್ತದೆ. ಮಗು ಕಣ್ಣೀರಿಟ್ಟು ದುಃಖಿಸುತ್ತದೆ. ದೊಡ್ಡವನಾದ ಹುಡುಗ ಕೊಲೆಗಡುಕನಾಗುತ್ತಾನೆ. ಅವನಿಗೆ ಮಹಾಯಾನದ ಪ್ರಜ್ಞಾಪಾರಮಿತ ಸೂತ್ರವನ್ನು ಕೈಯಾರೆ ಕಲಿಯುವಂತೆ ಮಾಡುತ್ತಾನೆ. ಬೌದ್ಧರ ಯಶಸ್ಸು ಇರುವುದು ಶಿಕ್ಷಣವನ್ನು ಕೈಗಳ ಮೂಲಕ ಕಲಿಸುವುದರಲ್ಲಿ ಇರಬೇಕು.

ಅನುಭವದಿಂದ ಕಲಿಯುವ ವಿದ್ಯೆಗೆ ತಾಳಿಕೆ ಗುಣ ಹೆಚ್ಚು. ಕಲಿಸುವ ಬೌದ್ಧ ಗುರುಗಳು ಕರುಣೆಯನ್ನೂ ತುಂಬಲು ನೋಡುತ್ತಾರೆ. ಅದು ಎಲ್ಲ ಸಾರಿ ಫಲ ನೀಡದು. ಕೊಲೆಗಾರ ಶಿಷ್ಯನನ್ನು ಪೊಲೀಸರು ಎಳೆದೊಯ್ಯಲು ಬರುತ್ತಾರೆ. ಪ್ರಜ್ಞಾಪಾರಮಿತ ಸೂತ್ರವನ್ನು ಬೆಕ್ಕಿನ ಬಾಲದಲ್ಲಿ ಅದ್ದಿ ಗುರು ಬರೆಯುತ್ತಾ ಹೋಗುತ್ತಾನೆ. ಶಿಷ್ಯ ಕೊಲೆಗೆ ಬಳಸಿದ ಚಾಕು ಹಿಡಿದು ಮರದ ಹಲಗೆಯ ಮೇಲಿನ ಅಕ್ಷರಗಳನ್ನು ಕೆತ್ತುತ್ತ ಹೋಗುತ್ತಾನೆ.

ಪೊಲೀಸನೊಬ್ಬ ಮೇಣದ ಬತ್ತಿ ಹಿಡಿದು ಕೆತ್ತಲು ಸಹಾಯ ಮಾಡುತ್ತಾನೆ. ಕೆತ್ತುತ್ತಲೇ ನಿದ್ದೆ ಹೋದ ಆರೋಪಿಗೆ ತನ್ನ ಕೋಟು ಬಿಚ್ಚಿ ಹೊದಿಸುತ್ತಾನೆ. ಅಕ್ಷರ ಕೆತ್ತಿದ್ದು ಮುಗಿದ ನಂತರ ಬೆಳಿಗ್ಗೆ ಶಿಷ್ಯನನ್ನು ಬೇಡಿ ತೊಡಿಸದೆ ಕರೆದೊಯ್ಯುತ್ತಾರೆ. ಶಿಷ್ಯನ ಜೊತೆಯಲ್ಲಿ ಬೆಕ್ಕೂ ಸಹ ಗುರುವನ್ನು ಬಿಟ್ಟು ಹೋಗುತ್ತದೆ. ಶಿಷ್ಯನನ್ನು ಎಳೆದೊಯದ್ದ ನಂತರ ಗುರು ದೋಣಿಯೊಳಗೆ ಬೆಂಕಿ ಹಚ್ಚಿಕೊಂಡು ದೇಹತ್ಯಾಗ ಮಾಡುತ್ತಾನೆ. ಬಿಡುಗಡೆಯಾದ ಶಿಷ್ಯ ಮರಳಿ ಬರುತ್ತಾನೆ. ತಾನು ಬಾಲ್ಯದಲ್ಲಿ ಕೊಂದಂತದೇ ಹಾವು ಕುಟೀರ ಸೇರಿರುತ್ತದೆ. ಸಂತನಾಗುವಿಕೆ ಅಲ್ಲಿಂದ ಶುರುವಾಗುತ್ತದೆ.

ಹೆಪ್ಪುಗಟ್ಟಿದ ಸರೋವರ. ಎಲೆ ಉದುರಿದ ಕಾಡು. ಮೌನವಾದ ಸೃಷ್ಟಿಯ ಒಂದು ಜಾವ ಅಳುವ ಹಸುಗೂಸನ್ನು ಹೊತ್ತ ಮುಖ ಮುಚ್ಚಿಕೊಂಡ ಹೆಣ್ಣೊಬ್ಬಳು ಆಶ್ರಮಕ್ಕೆ ಬರುತ್ತಾಳೆ. ಮಗುವನ್ನು ಆಶ್ರಮದಲ್ಲಿ ಬಿಟ್ಟು ನಡೆಯತೊಡಗುತ್ತಾಳೆ. ಮಂಜು ಗಡ್ಡೆ ಕರಗಿದ್ದ ಒಂದು ನೀರ ಕಂದರಕ್ಕೆ ಬಿದ್ದು ಸಾಯುತ್ತಾಳೆ. ಸಂತನಾಗುವವ ಹೋಗಿ ನೋಡಿದರೆ ಹೆಂಗಸಿನ ಬದಲು ಬುದ್ಧನ ವಿಗ್ರಹ ಸಿಗುತ್ತದೆ. ಮಗು ಚಟುವಟಿಕೆಯಿಂದ ಓಡಾಡತೊಡಗುತ್ತದೆ.

ಅದೂ ಕೂಡ, ಮೀನು, ಹಾವು ಮತ್ತು ಕಪ್ಪೆಯ ಬಾಯಿಗೆ ಕಲ್ಲು ತುರುಕಿ ಗಹಗಹಸಿ ನಗುತ್ತದೆ. ಇದು ಸಿನಿಮಾ. ಮಜೀದಿಯ ಮಕ್ಕಳು ದೇವದೂತರು.ವಿಶ್ವ ಮಾನವರು. ಕಿಮ್ ತೋರಿಸುವ ಮಕ್ಕಳೊಳಗೆ ನಿಸರ್ಗದ ಚಲನೆಯನ್ನು ಕಟ್ಟಿ ಹಾಕುವ, ಕೊಂದು ಖುಷಿಪಡುವವರು. ಮಜೀದಿ ದೊಡ್ಡವರ ಸಣ್ಣತನ ಮಕ್ಕಳಾಗುವ ಪ್ರಕ್ರಿಯೆಯಲ್ಲಿ ಅಳಿದು ಹೋಗುತ್ತದೆ ಎನ್ನುತ್ತಾನೆ.

ಕಿಮ್ ಮಕ್ಕಳು ಬದುಕನ್ನು ಸ್ಪರ್ಶಿಸಿ ದಾರ್ಶನಿಕರಾಗಬೇಕು, ಜ್ಞಾನ ಎಂಬುದು ಸುಖಾಸುಮ್ಮನೆ ದಕ್ಕುವುದಿಲ್ಲ ಎನ್ನುತ್ತಾನೆ. ಜ್ಞಾನವಿಲ್ಲದ ಮಗುತನ ಉಪಯೋಗವಿಲ್ಲದ್ದು. ಅದು ಮಾಡುವ ಕ್ರೌರ್ಯದ ಭಾರ ಹಗುರವಾದದ್ದೇನೂ ಅಲ್ಲ ಎಂಬುದು ಕಿಮ್ ನಿಲುವು.

ಕಿಮ್ ಇದಿಷ್ಟನ್ನೂ ಋತುಗಳ ಪಲ್ಲಟಗಳ ರೂಪಕದ ಮೂಲಕ ವಿವರಿಸುತ್ತಾನೆ. ಮೋಕ್ಷ ಎನ್ನುವುದು ಸ್ವಂತ ಅನುಭವವಿಲ್ಲದೆ ಉಪದೇಶಗಳಿಂದ ಬರಲಾರದು ಎನ್ನಿಸುತ್ತದೆ. ಬುದ್ಧನೂ ಅನುಭವಗಳ ಮೂಲಕವೇ ಲೋಕ ಸಂಗತಿಗಳನ್ನು ವಿವರಿಸಿದ. ಜತೆಗೆ ಪತಿತನಾಗದೆ ಮನುಷ್ಯ ಪಾವನನಾಗಲಾರನೆ? ಎಂಬೊಂದು ಪ್ರಶ್ನೆಯನ್ನು ಸಿನಿಮಾ ತಣ್ಣಗೆ ಕೇಳುತ್ತದೆ. ಮನುಷ್ಯನಾಳದ ಹಿಂಸೆ ಭೀಕರ ತಾರಕ ಮುಟ್ಟದೆ ಸಾಕ್ಷಾತ್ಕಾರ ಸಾಧ್ಯವಿಲ್ಲವೇ? ಎಂಬ ಪ್ರಶ್ನೆ ಹುಟ್ಟುತ್ತದೆ. ಬುದ್ಧ ಗುರುವೇ ಉತ್ತರ ಹೇಳಬೇಕು.

‘ದ ನೆಟ್’ ಸಿನಿಮಾದ ವಸ್ತು ಯುರೋಪಿಗೆ ಹೊಸತಲ್ಲ. ರಾಷ್ಟ್ರವಾದದ ಗಾಯಗಳು ಯುರೋಪನ್ನು ಮಾಗಿಸಿವೆ. ಆದರೆ ಒಂದೇ ತಾಯ ಮಕ್ಕಳಾದ ಉತ್ತರ, ದಕ್ಷಿಣ ಕೊರಿಯಾದಂತಹ ಪ್ರಾಚೀನ ಬೌದ್ಧ ರಾಷ್ಟ್ರಗಳು ಇದನ್ನು ಹೇಗೆ ನಿಭಾಯಿಸಬೇಕೆಂದು ತೋಚದೆ ಒದ್ದಾಡುತ್ತಿವೆ.

ಉಭಯ ರಾಷ್ಟ್ರಗಳ ಸೈದ್ಧಾಂತಿಕ ಕಲಹಗಳು, ನಿಷ್ಠೆಗಳು ಮನುಷ್ಯನನ್ನು ಹುಳುವಿನಂತೆ ಹೊಸಕಿ ಹಾಕುವುದರ ಕುರಿತು ಸಿನಿಮಾ ಮಾತನಾಡುತ್ತದೆ. ಅತ್ಯಂತ ದಾರಿದ್ರ್ಯದಲ್ಲಿರುವ ಕಮ್ಯುನಿಸಂನ ಹೆಸರಿನಲ್ಲಿ ಸರ್ವಾಧಿಕಾರಿ ಆಳುತ್ತಿರುವ ಉತ್ತರ ಕೊರಿಯಾದ ಮೀನುಗಾನೊಬ್ಬನ ದೋಣಿ ಗಾಳಿಗೆ ಸಿಲುಕಿ ದಕ್ಷಿಣ ಕೊರಿಯಾ ಭಾಗಕ್ಕೆ ಹರಿದು ಬಿಡುತ್ತದೆ.

ಒಂದು ಜುಜುಬಿ ಕೆರೆಯೂ ರಾಷ್ಟ್ರ ರಾಷ್ಟ್ರಗಳ ನಡುವೆ ಹರಿದು ಹೋಗಿರುತ್ತದೆ. ಮೀನುಗಾರನನ್ನು ದಕ್ಷಿಣದ ಸೈನಿಕರು ಬಂಧಿಸುತ್ತಾರೆ. ಭೀಕರ ಹಿಂಸೆ ನೀಡುತ್ತಾರೆ. ಕಡೆಗೆ, ಉತ್ತರ ಕೊರಿಯಾ ಕುಟುಂಬ ಮೂಲದ ದಕ್ಷಿಣ ಕೊರಿಯಾದ ತರುಣ ಸೈನಿಕನೊಬ್ಬ ಮೀನುಗಾರನ ನೆರವಿಗೆ ಬರುತ್ತಾನೆ. ಹಾಗಾಗಿ ಮೀನುಗಾರ ಸಾಯದೆ ಉಳಿದುಕೊಳ್ಳುತ್ತಾನೆ. ಹೊರಗಿನವರನ್ನು ಗೂಢಾಚಾರರೆಂದು ವಿಚಾರಿಸುವ ವೇಳೆ ನೀಡುವ ಭೀಕರ ಹಿಂಸೆ ಎದೆ ನಡುಗಿಸುತ್ತದೆ. ಅನೇಕರು ನಾಲಿಗೆಯನ್ನು ತಿರುಗಿಸಿ ನರ ಕಡಿದುಕೊಂಡು ಸತ್ತು ಬೀಳುತ್ತಾರೆ ಹಿಂಸೆ ತಾಳದೆ.

ಮೀನುಗಾರ ಅಮಾಯಕನೆಂದು ದಕ್ಷಿಣದವರಿಗೆ ಅರ್ಥವಾಗುತ್ತದೆ. ಅದಾದ ನಂತರ ಆತನಿಗೆ ದಕ್ಷಿಣ ರಾಷ್ಟ್ರದ ವೈಭವೋಪೇತ ನಗರ ತೋರಿಸಬೇಕೆಂಬ ತಂತ್ರ ಹೊಳೆಯುತ್ತದೆ. ಶತ್ರು ದೇಶದ ಮನುಷ್ಯನಿಗೆ ತನ್ನ ಸಾಹುಕಾರಿಕೆ ತೋರಿಸಬೇಕೆಂಬುದು ಯುದ್ಧ ತಂತ್ರ ಹಾಗೂ ಕ್ರೌರ್ಯದ ಇನ್ನೊಂದು ಮುಖ. ನೋಡಲು ಮೀನುಗಾರ ನಿರಾಕರಿಸುತ್ತಾನೆ. ನಗರದ ಝಗಮಗಿಸುವ ವೈಭವ ನೋಡಲಾರೆನೆಂದು ಮುಖ ಮುಚ್ಚಿಕೊಳ್ಳುತ್ತಾನೆ.

ದಕ್ಷಿಣದವರು ಹೆಣ್ಣು ಮಕ್ಕಳನ್ನು ಮಾರಿ, ತಲೆ ಹಿಡಿದು ನಗರಗಳನ್ನು ಕೊಬ್ಬಿಸಿದ್ದಾರೆ ಎಂಬುದು ಆತನ[ ಉತ್ತರದವರ] ಅಭಿಪ್ರಾಯ. ಇದು ಬಂಡವಾಳಿಗ ದೇಶಗಳ ಕುರಿತಾದ ಕಠೋರ ವಿಮರ್ಶೆ. ಅನ್ನವಿಲ್ಲದೆ ಬಡತನದಲ್ಲಿ ಜನರು ಸಾಯುವ ಚಿತ್ರಣ ಕಮ್ಯುನಿಸ್ಟ್ ಉತ್ತರ ಕೊರಿಯಾದ ಕುರಿತ ವಿಮರ್ಶೆ. ಮೀನುಗಾರನನ್ನು ನಡು ಬೀದಿಯಲ್ಲಿ ಬಿಟ್ಟು ಸೈನಿಕರು ಹಿಂಬಾಲಿಸ ತೊಡಗುತ್ತಾರೆ. ಆತ ಕಣ್ಣು ಮುಚ್ಚಿಕೊಂಡು ಓಡತೊಡಗುತ್ತಾನೆ.

ದಕ್ಷಿಣದವರ ಶ್ರೀಮಂತಿಕೆ ಸೆಳೆದುಬಿಟ್ಟರೆ ಎಂಬ ಭಯ ಅವನದು. ಕಡೆಗೆ ದಿಕ್ಕುಗಾಣದೆ ಬೀದಿ ಬೀದಿಯಲ್ಲಿ ಅಲೆಯುತ್ತಾನೆ. ಹಂದಿಯ ಸೂಪನ್ನು ಜೀವನದಲ್ಲಿ ನೋಡಿಯೇ ಇಲ್ಲವೇನೋ ಎಂಬಂತೆ ಕುಡಿಯುತ್ತಾನೆ. ನಗರದ ವೈಭವ ನೋಡಿ ಬೆರಗಾಗುತ್ತಾನೆ. ಕಡೆಗೆ ತರುಣ ಸೈನಿಕನ ಉಸ್ತುವಾರಿಯೊಳಗೆ ಆತ ದಕ್ಷಿಣದವರ ಕುರಿತು ತುಸು ಉದಾರಿಯಾಗುತ್ತಾನೆ. ತರುಣ ಹೊಸ ಬಟ್ಟೆಯನ್ನು, ಒಂದಿಷ್ಟು ಹಣವನ್ನು ಕೊಡುತ್ತಾನೆ. ಕಡೆಗೊಂದು ದಿನ ಉತ್ತರದ ಗಡಿಯೊಳಗೆ ಆತನನ್ನು ಬಿಟ್ಟು ಬಿಡುತ್ತಾರೆ.

ಈಗ ಉತ್ತರದ ಸೈನಿಕರ ಗೂಢಾಚಾರಿಕೆ ಶುರುವಾಗುತ್ತದೆ. ತರುಣ ಸೈನಿಕ ನೀಡಿದ್ದ ಹಣವನ್ನು ಮೀನುಗಾರ ತನ್ನ ಗುದದ್ವಾರದೊಳಗೆ ಬಚ್ಚಿಟ್ಟುಕೊಳ್ಳುತ್ತಾನೆ. ಉತ್ತರದವರಿಗೆ ಈತ ಗೂಢಾಚಾರನಾಗಿ ಬದಲಾಗಿರಬಹುದೇ ಎಂಬ ಅನುಮಾನ. ಜೊತೆಗೆ ಆತ ತಂದಿರಬಹುದಾದ ಹಣದ ಬಗ್ಗೆ ಆಸೆ. ಅಲ್ಲಿನ ಸೈನ್ಯದ ಸ್ಥಳೀಯ ಮುಖಂಡ ಮೀನುಗಾಗರನನ್ನು ಹಿಂಬಾಲಿಸುತ್ತಾನೆ. ಕಡೆಗೆ ಆತ ಮಲ ವಿಸರ್ಜನೆ ಮಾಡಿದ ನಂತರ ಮಲ ಕೆದಕಿ ಹಣವನ್ನು ತೆಗೆದುಕೊಳ್ಳುತ್ತಾನೆ.

ಇದು ಉತ್ತರ ಕೊರಿಯಾದ ಸೈನಿಕರ ಭ್ರಷ್ಟತೆ. ಅವನಿಗೆ ಮೀನು ಹಿಡಿಯಲೂ ಬಿಡದೆ ಕಿರುಕುಳ ನೀಡುತ್ತಾರೆ. ಇತ್ತ ಹೊಟ್ಟೆಗೂ ಇಲ್ಲ. ಸೈನಿಕರ ಕಿರುಕುಳ ಬೇರೆ. ಮೀನುಗಾರ ಪ್ರತಿಭಟಿಸುತ್ತಾನೆ. ಕಡೆಗೆ ತಲ್ಲಣಗೊಳಿಸುವ ಹಸಿವು ಸೈನ್ಯದ ಆಜ್ಞೆ ಧಿಕ್ಕರಿಸುವಂತೆ ಮಾಡುತ್ತದೆ. ದೋಣಿ ತೆಗೆದುಕೊಂಡು ನೀರಿಗಿಳಿಯುತ್ತಾನೆ. ಸೈನಿಕರು ಗುಂಡು ಹೊಡೆದು ಅವನನ್ನು ಕೊಲ್ಲುತ್ತಾರೆ. ಎಲ್ಲ ಸರ್ವಾಧಿಕಾರಿ ಪ್ರಭುತ್ವಗಳೂ ಮನುಷ್ಯನನ್ನು ನಿಕೃಷ್ಟವಾಗಿ ನೋಡುತ್ತವೆ. ಅದಕ್ಕೆ ರಾಷ್ಟ್ರ ಸಂರಚನೆ ಎಂಬುದು ನೆಪದ ಆಯುಧವಾಗಿರುತ್ತದೆ. ಸದಾ ಕೀಳರಿಮೆಯಲ್ಲಿ ಬದುಕುವ ಅದು ದ್ವೇಷ ಮತ್ತು ಗುಮಾನಿಗಳನ್ನು ತನ್ನ ಒಡಲೊಳಗಿಟ್ಟುಕೊಂಡು ಏಗುತ್ತಿರುತ್ತದೆ.

ಎರಡೂ ಸಿನಿಮಾಗಳು ವಿಭಿನ್ನ ದಿಕ್ಕುಗಳನ್ನು ವಿವರಿಸುವ ಕಲಾಕೃತಿಗಳು. ಒಂದು ರಾಷ್ಟ್ರಗಳ ನಡುವಿನ ಕ್ರೌರ್ಯವನ್ನು, ಗಡಿಗಳ ನೆಪದಲ್ಲಿ ನಡೆಯುವ ದಮನವನ್ನು ಕುರಿತು ಗೇಲಿ ಮಾಡುತ್ತದೆ. ಕಮ್ಯುನಿಸ್ಟ್ ದೇಶದ ಬಡತನ, ಭ್ರಷ್ಟ ಮತ್ತು ದುಷ್ಟ ಸರ್ವಾಧಿಕಾರಿ ಮಿಲಿಟರಿ ಆಡಳಿತದಂತೆಯೇ ದಕ್ಷಿಣ ಕೊರಿಯಾ ಪ್ರಜಾಪ್ರಭುತ್ವದ ಹೆಸರಲ್ಲಿ, ನಡೆಸುವ ಕ್ರೌರ್ಯ ಕೂಡ ಅತ್ಯಂತ ಭೀಕರ.

ಮನುಷ್ಯನ ಮನಸ್ಸನ್ನು ಪಲ್ಲಟಗೊಳಿಸುವ ಸಂಪತ್ತಿನ ಧಿಮಾಕು ಅಮಾನವೀಯ. ರಾಷ್ಟ್ರವಾದದ ಕ್ರೌರ್ಯ 21 ನೇ ಶತಮಾನದ ಏಷ್ಯಾದ, ಆಫ್ರಿಕಾಗಳ ನೆಲದಲ್ಲಿ ಮುಂದುವರೆಯುತ್ತಿದೆ. ಎರಡೂ ರಾಷ್ಟ್ರಗಳೂ ಅಮಾನವೀಯವೇ. ಕ್ರೂರ ಸ್ವಭಾವದವೆ. ಬೌದ್ಧ ಮಾರ್ಗವೆಂಬುದು ಅತ್ಯಂತ ಕೃತಕ ಇಲ್ಲಿ. ಇದು ರಾಜಕೀಯ ಕಥನ.

‘ಸ್ಪ್ರಿಂಗ್, ಸಮ್ಮರ್..’ ಆಧ್ಯಾತ್ಮದ ನಡುವಿನ ವಾಂಛೆಗಳ ರಾಜಕೀಯ ಕಥನ ಪಂಪನ ಆದಿ ಪುರಾಣದಂತೆ. ‘ದ ನೆಟ್’ ಸಿನಿಮಾ ರಾಜಕೀಯಕ್ಕೆ ಆಧ್ಯಾತ್ಮಿಕ ಸ್ಪರ್ಶ ಬೇಕು ಎಂದು ಬಯಸುವ ವಿಕ್ರಮಾರ್ಜುನ ವಿಜಯ. ಒಟ್ಟಾರೆ, ನೆಲದ ಬಯಕೆಯ ಕುರುಕ್ಷೇತ್ರದಲ್ಲಿ ಬಡವರ ಭಿನ್ನಪವ ಕೇಳಿದವರಿಲ್ಲ.

ಕಡೆಯದಲ್ಲದ ಮುಖ್ಯ ಮಾತು; ಇಂಥ ಸಿನಿಮಾಗಳನ್ನು ನೀಡಿದ ಕಿಮ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಮೂವರು ಹೆಣ್ಣು ಮಕ್ಕಳು ಮೀಟೂ ಚಳುವಳಿಯಲ್ಲಿ ಭಾಗವಹಿಸಿ ಕೋರ್ಟಿಗೆ ಹೋಗಿದ್ದರು. ಕೋರ್ಟು ಆತನಿಗೆ ದಂಡ ಹಾಕಿ ಖುಲಾಸೆ ಮಾಡಿತು. ದಿಕ್ಕೆಡಿಸುವ ಸಿನಿಮಾ ಮಾಡಿದ ಕಿಮ್ ಸ್ವತಃ ಗಂಡಿನ ಠೇಂಕಾರದ ಮೂಟೆಯಾಗಿದ್ದನೇ ಎಂಬೊಂದು ಪ್ರಶ್ನೆಯನ್ನೂ ಉಳಿಸಿ ಹೋಗಿದ್ದಾನೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.

ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್‌ನ ‘ಯೂನಿವರ್ಸಿಟಿ ಆಫ್ ಸ್ಯಾಲ್‌ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.

ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್‌ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

Published

on

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.

ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.

ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.

ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending