Connect with us

ದಿನದ ಸುದ್ದಿ

ಕಿಮ್ ಕಿ ಡುಕ್; ಎಣ್ಣೆ ತೀರಿದ ಏಷಿಯಾದ ವಿಕ್ಷಿಪ್ತ ಹಣತೆ

Published

on

  • ಡಾ.ನೆಲ್ಲುಕುಂಟೆ ವೆಂಕಟೇಶ್

ಳೆದ ದಕ್ಷಿಣ ಕೊರಿಯಾದ ನಿರ್ದೇಶಕ ಕಿಮ್ ಕಿ ಡುಕ್ ಲಾಟ್ವಿಯಾದ ಆಸ್ಪತ್ರೆಯೊಂದರಲ್ಲಿ ಮರಣ ಹೊಂದಿದ. ಕೊರೋನ ವೈರಸ್ಸು ಈತನನ್ನು ತಿಂದು ಹಾಕಿದೆ. ಕಿಮ್ ಸಾವು ಜಗತ್ತಿನ ಗಂಭೀರ ಸಿನಿಮಾಸಕ್ತರನ್ನು ಕಾಡಿದಂತೆ ನಮ್ಮನ್ನು ಕಾಡಲಿಲ್ಲ. ಕಡೇ ಪಕ್ಷ ಕೇರಳವನ್ನು ಕಾಡಿದಷ್ಟೂ ಕಾಡಲಿಲ್ಲ. ಕೇರಳ ಮನೆ ಮಗನನ್ನು ಕಳೆದುಕೊಂಡ ಹಾಗೆ ಸ್ಪಂದಿಸಿದೆ. [ಮಲಯಾಳಂಗೆ ಆತನ ಬಹುಪಾಲು ಸಿನಿಮಾಗಳು ಡಬ್ ಆಗಿವೆ. ಅಲ್ಲಿ ಅವನ ಸಿನಿಮಾ ಉತ್ಸವಗಳೂ ನಡೆದಿವೆ}.

ಅವನ ಸಾವಿನ ಕುರಿತು ಕನ್ನಡದ ಸೋಷಿಯಲ್ ಮೀಡಿಯಾದಲ್ಲಿ ತುಸು ಸದ್ದು ಮಾಡಿದ್ದು ಬಿಟ್ಟರೆ ಹೆಚ್ಚೇನೂ ಚರ್ಚೆಯಾಗಲಿಲ್ಲ. ಎಂದಿನಂತೆ ಕರ್ನಾಟಕದ ಸಿನಿಮಾ ಜನ ತಣ್ಣಗೆ ಪ್ರತಿಕ್ರಿಯಿಸಿದರು. ಬಹಳ ಜನ ಕನ್ನಡ ಸಿನಿಮಾದವರಿಗೆ ಈತ ಗೊತ್ತಿದ್ದನೋ ಇಲ್ಲವೋ ತಿಳಿಯದು. ಕನ್ನಡ ಬಾಲಿವುಡ್ಡನ್ನು ಮಾದರಿಯಾಗಿಟ್ಟುಕೊಂಡು ಸಿನಿಮಾ ಮಾಡಲು ಪ್ರಯತ್ನಿಸುತ್ತಿದೆ. ಮಲೆಯಾಳಂಗೆ ಇರುವ ಡಯಸ್ಪೋರಾ ಗುಣದಿಂದಾಗಿ ಅವರನ್ನು ಜಗದ ಜತೆ ಸಂವಾದ ಮಾಡುವ ಮಾಂತ್ರಿಕರನ್ನಾಗಿಸಿದೆ.

ಮಲೆಯಾಳಿಗರು ಮನುಷ್ಯನ ಆಳದ ಇಂಪಲ್ಸಿವ್ ಗುಣಗಳನ್ನು ಹಿಡಿದು ಯೂನಿವರ್ಸಲ್ ಆಗಬಹುದಾದ ಸಿನಿಮಾಗಳನ್ನು ಕಟ್ಟುತ್ತಿದ್ದಾರೆ. ಕನ್ನಡಕ್ಕೆ ಇದು ಯಾಕೊ ಸಾಧ್ಯವಾಗಿಲ್ಲ. ನಮ್ಮಲ್ಲಿ ಯೂನಿಫಾರ್ಮಿಟಿಯ ಫ್ರೇಮಿನಲ್ಲಿಟ್ಟ ಪ್ರೇಮ, ಜೋಕುಗಳು, ಅಂತರಂಗವೇ ಇಲ್ಲದಂತೆ ಕಾಣುವ ಇಟ್ಟಿಗೆ, ಜಲ್ಲಿಯಂಥ ವಿಲನ್‍ಗಳು, ಅವರ ರಕ್ತಪಾತಗಳು ಇವುಗಳನ್ನು ಪದೇ ಪದೇ ತಿರುಗಿಸಿ ಸೂಕ್ಷ್ಮತೆಯುಳ್ಳವರನ್ನು ಸಿನಿಮಾಗಳತ್ತ ನೋಡದ ಹಾಗೆ ಮಾಡಲಾಗಿದೆ.

ಹಿಂಸೆಯಲ್ಲಿ ರಣ ಹಿಂಸೆ ತೋರಿಸುವ ಸಿನಿಮಾ ದುಡ್ಡು ಮಾಡುತ್ತದೆ ಎಂಬ ಸೂತ್ರವೇನೋ ಇವರಿಗೆ ಸಿಕ್ಕಿಬಿಟ್ಟಂತಿದೆ. ಇದು ನೋಡುಗರ ಸಮಸ್ಯೆಯೋ ಇಲ್ಲ ಸಿನಿಮಾ ಮಾಡುವವರ ಸಮಸ್ಯೆಯೋ ತಿಳಿಯದು. ಇಬ್ಬರೂ ಒಬ್ಬರತ್ತ ಒಬ್ಬರು ಮಾತ್ರ ಕೈ ತೋರಿಸಿಕೊಂಡು ಕೂತಿದ್ದಾರೆ. ಇದೆಲ್ಲದರ ನಡುವೆ ಕನ್ನಡ ತೆಳುವಾಗುತ್ತಿದೆ. ಆಧುನಿಕ ಸಂದರ್ಭದಲ್ಲಿ ಆಹಾರ ಸಂಸ್ಕೃತಿ, ಸಿನಿಮಾ, ಸಂಗೀತ ಸಂಸ್ಕøತಿಗಳು ಭಾಷೆಯನ್ನು ಮತ್ತು ಸಂಸ್ಕೃತಿಯನ್ನು ವಿಸ್ತರಿಸಲು ಕಾರಣವಾಗುತ್ತಿವೆ. ನಾವು ಇದನ್ನು ಮರೆತಂತೆ ವರ್ತಿಸುತ್ತಿದ್ದೇವೆ.

ಕನ್ನಡದ ಕಲಾತ್ಮಕ ಸಿನಿಮಾಗಳೂ ಸಹ ನನ್ನನ್ನು ಕಾಡಿದ್ದಿಲ್ಲ. ಅವು ಡಾಕ್ಯುಮೆಂಟರಿ ಲೆವೆಲ್ಲಿನಿಂದ ಮೇಲೆದ್ದ ಹಾಗೆ ಕಂಡೇ ಇಲ್ಲ. ಇಷ್ಟಕ್ಕೂ ಸಿನಿಮಾವನ್ನು ಕಲಾತ್ಮಕ, ಕಮರ್ಷಿಯಲ್ ಎಂದು ವಿಂಗಡಿಸುವುದೇ ತಪ್ಪಲ್ಲವೇ? ಕಲಾತ್ಮಕ ಸಿನಿಮಾ ಒಂದನ್ನು ಜನ ನೋಡದಿದ್ದರೆ, ತಿಂದ ಬಂಡವಾಳವನ್ನು ಅದು ವಾಪಸ್ಸು ನೀಡದಿದ್ದರೆ ಅಂಥ ಸಿನಿಮಾವನ್ನು ಯಾಕೆ ಮಾಡಬೇಕು? ಕಮರ್ಷಿಯಲ್ ಚಿತ್ರಕ್ಕೆ ಕಲೆಯ ಸ್ಪರ್ಶವೇ ಇಲ್ಲದಿದ್ದರೆ ಅದೂ ಸಹ ಹುಸಿಯಾದ ರಚನೆಯೇ ಅಲ್ಲವೇ?

ಒಳ್ಳೆಯತನ ಮತ್ತು ಕೆಟ್ಟತನಗಳನ್ನು ಸರಳ ರೇಖೆಗಳಲ್ಲಿ ಇರಿಸಿ ನೋಡುವ ಚಾಳಿಯೊಂದು ಕನ್ನಡವನ್ನು ಆವರಿಸಿಕೊಂಡು ಕೂತಿದೆ. ನಾಯಕನಾದವನು ಹೀಗೆ ಇರಬೇಕು ಎಂಬ ಫಾರ್ಮುಲಾವನ್ನು ಅಚ್ಚು ಕಟ್ಟಾಗಿ ಪಾಲಿಸಲಾಗುತ್ತದೆ. ರಾಮನೊಳಗೂ, ಕೃಷ್ಣನೊಳಗೂ ಅಸಂಖ್ಯಾತ ಓರೆ ಕೋರೆಗಳಿದ್ದವು ಎಂದು ವ್ಯಾಸ, ವಾಲ್ಮೀಕಿಯರು ತೋರಿಸುತ್ತಾರೆ. ಮನುಷ್ಯನಾಗುವುದೆಂದರೆ ಮೃಗೀಯತೆಯಿಂದ ಬಿಡುಗಡೆ ಪಡೆಯುವುದೆಂದು ಅರ್ಥ.

ತಂದೆ ಆ ಮೃಗತ್ವದಿಂದ ಬಿಡುಗಡೆ ಪಡೆದಿದ್ದ ಎಂದರೆ ಮಗನಿಗೆ ಮನುಷ್ಯತ್ವ ಬಂದು ಬಿಡುತ್ತದೆ ಎಂದಲ್ಲ. ಮಗನೂ ಸಂಘರ್ಷ ಮಾಡಿಯೇ ಬದುಕಬೇಕು. ಈ ತಾಕಲಾಟಗಳೇ ಮನಶ್ಯಾಸ್ತ್ರದ ಮೂಲ ತಾಕುಗಳು. ಬುಡಕಟ್ಟು, ನಾಗರಿಕತೆ, ರಾಷ್ಟ್ರಗಳಿಗೂ ಇಂಪಲ್ಸಿವ್ ಕ್ಯಾರೆಕ್ಟರ್ ಇರುತ್ತದೆ. ಪ್ರೇಮ, ಕಾಮ, ಧರ್ಮದ ಸ್ಥಗಿತ ಮೌಲ್ಯಗಳು, ಜಾತಿ, ವರ್ಗಗಳ ದಮನಕಾರಿ ಗುಣಗಳು ರಾಷ್ಟ್ರದ ಶ್ರೇಷ್ಠತೆಯ ಸಮಸ್ಯೆಗಳು. ಹಿಂಸೆ, ಶಾಂತಿ ಕುರಿತಾದ ಹಂಬಲ, ಪ್ರೀತಿ ಕುರಿತ ದಾಹ ಇವೆಲ್ಲ ಮನುಷ್ಯರನ್ನು ನಿರಂತರ ಕಾಡುತ್ತಲೇ ಇವೆ. ಕಂಗೆಡಿಸುತ್ತಲೇ ಇವೆ. ನಾಯಕನೊಳಗೊಳಗೊಬ್ಬ ಖಳ. ಖಳನೊಳಗೊಬ್ಬ ಮನುಷ್ಯನಿರಲು ಸಾಧ್ಯ ಎಂದು ಪಂಪ ರನ್ನರ ಕಾಲದಲ್ಲೇ ಕನ್ನಡವು ಚಿಂತಿಸಿದೆ.

ಕನ್ನಡದ ಸಿನಿಮಾಗಳು ನಡುಗಿಸುವಂತಹ, ಮುಟ್ಟಿ ನೋಡಿಕೊಳ್ಳುವಂತಹ, ಕಾಡುವಂತಹ ಇಂಪಲ್ಸಿವ್ ಕ್ಯಾರೆಕ್ಟರ್‍ಗಳನ್ನು ಸೃಷ್ಟಿಸಿದೆಯೇ? ಎಂಬುದನ್ನು ಕೇಳಿಕೊಳ್ಳಲು ಸಕಾಲ ಇದು. ಪಕ್ಕದ ಮಲಯಾಳಂ ಸಿನಿಮಾಗಳ ಮೂಲಕ ವಿಶ್ವಸ್ಥ ವ್ಯಾಕರಣವನ್ನು ಹಿಡಿದು, ಸ್ಥಳೀಯ ರಂಗು ಬಳಿದುಕೊಂಡು ನರ್ತಿಸುತ್ತಿದೆ. ತಮಿಳಿನಲ್ಲೂ ಪ್ರಧಾನ ಧಾರೆಯ ದೃಷ್ಟಿಕೋನವನ್ನು ಭಂಗಿಸುವ ಸಿನಿಮಾಗಳು ಆಗಾಗ ಬರುತ್ತಿವೆ.

ಕನ್ನಡ ಸಿನಿಮಾಗಳ ಪ್ರಗತಿಪರತೆ ಜಾತಿ, ಧರ್ಮ ಮೀರಿ ಪ್ರೀತಿ ಮಾಡುವುದು, ಪಾಠ ಮಾಡುವ ಮೇಷ್ಟ್ರುಗಳನ್ನು ಜೋಕರುಗಳಾಗಿ ಚಿತ್ರಿಸುವುದು, ಆಡಳಿತಶಾಹಿಯನ್ನು ಕೆಟ್ಟದಾಗಿ ಬಯ್ಯುವುದು, ಬಡವನೊಬ್ಬ ವೇಗವಾಗಿ ಶ್ರೀಮಂತನಾಗುವುದು, ರೌಡಿಯಾದರೂ ಒಳ್ಳೆಯ ಕಾರಣಕ್ಕೆ ಇತರರನ್ನು ಕೊಲ್ಲುವುದು ಮುಂತಾದ ಕತೆಗಳಾಚೆಗೆ ಹೋಗಿದ್ದು ಬಹಳ ಕಡಿಮೆ. ವಾಸ್ತವವಲ್ಲದ ಹುಸಿಯ ಬಣ್ಣವನ್ನು ಜನರ ಮೆದುಳ ಮೇಲೆ ತೇಲಿಸಲಾಗುತ್ತಿದೆ.

ಕಿಮ್ ಕಿ ಡುಕ್ ಸಾವು ಇದನ್ನೆಲ್ಲ ನೆನಪಿಸಿತು. ಕಿಮ್ ವಿಪರೀತ ವಿಕ್ಷಿಪ್ತ ಮನಸ್ಸಿನ ಮನುಷ್ಯ. ದಕ್ಷಿಣ ಕೊರಿಯಾದ ಗ್ಯೊಂಗ್ ಸ್ಯಾಂಗ್ ಪ್ರದೇಶದಲ್ಲಿ ಹುಟ್ಟಿ ಸಿಯೋಲ್‍ನ ಕಾರ್ಖಾನೆಯೊಂದರಲ್ಲಿ ಕಾರ್ಮಿಕನಾಗಿ ದುಡಿದ. ಅಲ್ಲಿಂದ ಪ್ಯಾರಿಸ್ಸಿಗೆ ಹೋಗಿ ಬೀದಿಗಳಲ್ಲಿ ಪೈಂಟಿಂಗ್ ಮಾಡುತ್ತಾ ಅಲ್ಲಿನ ಕಲೆಯ ಅಭಿವ್ಯಕ್ತಿ ವಿಧಾನಗಳನ್ನು ಆಳವಾಗಿ ಗಮನಿಸತೊಡಗಿದ.

ನಿಧಾನಕ್ಕೆ ಸಿನಿಮಾ ಕಡೆಗೆ ನಡೆದ. 1996 ರಲ್ಲಿ ಕ್ರೊಕೋಡೈಲ್ ಸಿನಿಮಾ ಮಾಡಿದ. ಬುದ್ಧಿಸ್ಟ್ ದೇಶವಾದ ದಕ್ಷಿಣ ಕೊರಿಯಾದಲ್ಲಿ ಈತನ ಸಿನಿಮಾಗಳ ಬೆಚ್ಚಿ ಬೀಳಿಸುವ ಗುಣ, ಅತಿ ಎನ್ನಿಸುವ ಒರಟುತನ, ಹಸಿ ಹಸಿಯಾದ ಮನುಷ್ಯರ ವಾಂಛೆಗಳು ಮೀಡಿಯಾಗಳ, ಪಂಡಿತರ ಗಮನ ಸೆಳೆಯಲಿಲ್ಲ. ಸಿಟ್ಟಿಗೆದ್ದ ಕಿಮ್ ತನ್ನ ದೇಶದಲ್ಲಿ ಸಿನಿಮಾ ಬಿಡುಗಡೆ ಮಾಡುವುದಿಲ್ಲವೆಂದು ಹಠ ಮಾಡಿದ.

ಕಿಮ್‍ನ ಸಿನಿಮಾ ‘ ದ ನೆಟ್’ ಅನ್ನು ನಾನು 2017 ರಲ್ಲಿ ಬೆಂಗಳೂರಿನಲ್ಲಿ ನಡೆದ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಮೊದಲ ಬಾರಿಗೆ ನೋಡಿದೆ. ಆ ಸಿನಿಮಾ ವಿಶ್ವಾತ್ಮಕವಾದವನ್ನು ಪ್ರತಿಪಾದಿಸುತ್ತಿದ್ದ ಜಗತ್ತಿನ ಅನೇಕ ಚಿಂತಕರನ್ನು ನೆನಪಿಸಿತು. ಮನುಷ್ಯನ ಒಳ್ಳೆಯದಕ್ಕೆಂದು ನಿರ್ಮಾಣವಾದ ರಾಷ್ಟ್ರವೆಂಬ ಆಧುನಿಕ ರಾಜಕೀಯ ಸಂರಚನೆಯು ಭೀತಿಕಾರಕ ಮತ್ತು ಹಿಂಸ್ರಕವೆಂದು ಆ ಸಿನಿಮಾ ವಿವರಿಸುತ್ತದೆ.

ನೆಟ್ ಸಿನಿಮಾ ನೋಡಿದ ನಂತರ ಅವನ ಉಳಿದ ಸಿನಿಮಾಗಳನ್ನು ಹುಡುಕಿ ಹುಡುಕಿ ನೋಡತೋಡಗಿದೆ. ಕೆಲವು ಸಿನಿಮಾಗಳು ವಿಕ್ಷಿಪ್ತ ಅನ್ನಿಸಿದರೆ ಕೆಲವು ಮನುಷ್ಯನ ನಾಭಿಯಾಳದ ಸಂಕಟದಿಂದ ಎದ್ದು ಬರುತ್ತಿವೆ ಅನ್ನಿಸಿದವು. ನನ್ನನ್ನು ಬಹಳ ಕಾಡಿದ ಸಿನಿಮಾಗಳು ಮೂರು; ದ ನೆಟ್, 3 ಐರನ್ ಮತ್ತು ಸ್ಪ್ರಿಂಗ್, ಸಮ್ಮರ್, ಫಾಲ್ ವಿಂಟರ್ ಅಂಡ್ ಸ್ಪ್ರಿಂಗ್. ಸಿನಿಮಾ ನೋಡಿ ಬಹಳ ಕಾಲವಾದರೂ ಅದರ ಗುಂಗಿನಿಂದ ಹೊರಬರಲಾಗದಂತೆ ಈ ಸಿನಿಮಾಗಳು ಕಾಡುತ್ತಿವೆ.

ಅತ್ಯುತ್ತಮ ಕಲಾಕೃತಿಯೊಂದು ಸದಾ ತನ್ನನ್ನು ಬಂಧಿಸುವ ಫಾರ್ಮ್ ಅನ್ನು ಮುರಿಯಲು ಪ್ರಯತ್ನಿಸುತ್ತಿರುತ್ತದೆ. ಸಿನಿಮಾ, ಪೈಂಟಿಂಗ್, ಕತೆ, ಪದ್ಯ, ಕಾದಂಬರಿ, ನಾಟಕ ಎಲ್ಲವೂ ಹಾಗೆಯೇ. ಫಾರ್ಮಿನ ಬಂಧನದಿಂದ ಬಿಡಿಸಿಕೊಳ್ಳದೆ ಇದ್ದರೆ ಅಂತಹ ಕಲಾಕೃತಿ ಕೃತಕ ಅನ್ನಿಸಲಾರಂಭಿಸುತ್ತದೆ. ಕಾಲ, ದೇಶಗಳ ಹಂಗು ಮೀರಿ ಕತೆ, ಕಲಾಕೃತಿಯು ಮನುಷ್ಯರೆಲ್ಲರ ಸಂಕಟ, ತೊಳಲಾಟ ಅನ್ನಿಸತೊಡಗಿದರೆ ಮಾತ್ರ ಬದುಕಿನ ಕತೆಯಾಗುತ್ತದೆ. ಕಿಮ್ ನ ಸಿನಿಮಾಗಳು ಅಂತಹ ದಿಗಂತದ ಕಡೆಗೆ ಏರಲು ಯತ್ನಿಸುತ್ತವೆ.

ಕುರಸೋವಾನ ನಂತರ ಪಶ್ಚಿಮದ ಜಗತ್ತು ಏಷ್ಯಾದ ಕಡೆಗೆ ತಿರುಗಿ ನೋಡಿದ್ದು ಒಂದರ್ಥದಲ್ಲಿ ಕಿಮ್ ಕಿ ಡುಕ್ ಕಾರಣದಿಂದಾಗಿ. (ಭಾರತದಲ್ಲಿ ಸತ್ಯಜಿತ್ ರೇ ಮತ್ತು ಅಮೀರ್ ಖಾನ್ ಒಂದಿಷ್ಟು ಸೆಳೆವ ಕೆಲಸ ಮಾಡಿದ್ದಾರೆ).ಇರಾನಿನ ಮಜೀದ್ ಮಜೀದಿಯೂ ಈ ಕ್ಷೇತ್ರದಲ್ಲಿ ಗಮನಾರ್ಹ ಕೆಲಸ ಮಾಡಿದ್ದಾನೆ. ಕಿಮ್ ಗಿಂತ ಒಂದು ವರ್ಷ ದೊಡ್ಡನಾದ ಮಜೀದಿ ಮಕ್ಕಳ ಮೂಲಕ ಮನುಷ್ಯರ ಸಂಕಟಗಳನ್ನು ಹೇಳಲು ಪ್ರಯತ್ನಿಸುತ್ತಾನೆ.

ಮಜೀದಿಯ ‘ಚಿಲ್ಡ್ರನ್ ಆಫ್ ಹೆವನ್’, ‘ದ ಕಲರ್ ಆಫ್ ಪ್ಯಾರಡೈಸ್’ ಗಮನಾರ್ಹ ಕಲಾಕೃತಿಗಳು. ಸಿನಿಮಾಗಳ ಮೂಲಕ ವiಜೀದಿ ಇರಾನಿನ ಗ್ರಾಮೀಣ ಕೃಷಿ ಕುಟುಂಬಗಳ ಕಣ್ಣೀರು, ಸಂಕಟ, ಪ್ರೇಮ ಮತ್ತು ಮನುಷ್ಯರ ನವಿರುತನಗಳನ್ನು ಹೆಕ್ಕಿ ತರಲು ಪ್ರಯತ್ನಿಸುತ್ತಾನೆ. ಮಕ್ಕಳನ್ನು ದೇವರ ಪ್ರತಿನಿಧಿಗಳೆಂದು ಗ್ರಹಿಸುತ್ತಾನೆ.

ಕಿಮ್ ಮಜೀದಿಯ ಹಾಗೆ ಬೇಗ ಆರ್ದ್ರಗೊಳ್ಳುವ ಮನುಷ್ಯನಲ್ಲ. ಆತ ಒಂದರ್ಥದಲ್ಲಿ ದೇವರ ವಿರುದ್ಧವೇ ದಂಗೆ ಏಳುವ ಮನುಷ್ಯ. ಅವನ ಸ್ಪ್ರಿಂಗ್ ಸಮ್ಮರ್… ಸಿನಿಮಾ ಒಂದರ್ಥದಲ್ಲಿ ಬುದ್ಧನ ವಿರುದ್ಧ ದಂಗೆ ಏಳುವ ಸಿನಿಮಾ. ಮಹಾಯಾನಿ ಬೌದ್ಧಗುರು ಮತ್ತು ಶಿಷ್ಯನ ನಡುವೆ ನಡೆವ ಈ ಕತೆ ಚಕ್ರಗತಿ ಸಿದ್ಧಾಂತವನ್ನು ಪ್ರತಿಪಾದಿಸುತ್ತದೆ. ಮುಖ್ಯವಾಗಿ ಅದು ಎರಡು ತತ್ವಗಳನ್ನು ಪ್ರತಿಪಾದಿಸುತ್ತದೆ.

ಒಂದು, “ಕಾಮವು ತನ್ನ ತೀರದ ದಾಹದಿಂದ ಇನ್ನೊಂದು ಜೀವದ ಮೇಲೆ ಪೊಸೆಸಿವ್ ಆಗುತ್ತದೆ, ಕಡೆಗೆ ಕೊಲೆ ಮಾಡಲು ಉತ್ತೇಜಿಸುತ್ತದೆ”. ಗುರು, ಶಿಷ್ಯರು ಪ್ರಕೃತಿಯ ಏರಿಳಿತಗಳನ್ನು ನೋಡುತ್ತಾ ಸರೋವರದ ಮಧ್ಯದ ಕುಟೀರದಲ್ಲಿ ಬದುಕಿದ್ದ ನೆಲೆಗೆ ಖಿನ್ನ ಮನಸ್ಸಿನ ಕಾಯಿಲೆ ಅಂಟಿದ್ದ ಹುಡುಗಿಯೊಬ್ಬಳು ಬರುತ್ತಾಳೆ. ಶಿಷ್ಯ ಅವಳ ಮೋಹಕ್ಕೆ ಬಿದ್ದು ಅವಳೊಂದಿಗೆ ಮಲಗುತ್ತಾನೆ. ಗುರುವಿಗೆ ಗೊತ್ತಾಗುತ್ತದೆ.

ಇದು ಪುನರಾವರ್ತನೆಯಾಗುತ್ತದೆ. ಆಗ ಗುರು ಮೇಲಿನ ಮಾತನ್ನು ಶಿಷ್ಯನಿಗೆ ಹೇಳುತ್ತಾನೆ. ಗಂಡಿನ ಸ್ಪರ್ಶದಿಂದ ಹುಡುಗಿ ಗುಣಮುಖಳಾಗುತ್ತಾಳೆ. ದೈಹಿಕ ಸಂಪರ್ಕದಿಂದ ಕಾಯಿಲೆ ವಾಸಿಯಾಗುವುದಾರೆ ಅದು ಒಮ್ಮೆ ಸಾಕು ಎನ್ನುವಷ್ಟು ಪ್ರಾಕ್ಟಿಕಲ್ ಆಗಿ ಗುರು ಯೋಚಿಸುತ್ತಾನೆ.

ಆದರೆ ಅದೇ ಕಾಯಿಲೆಯಾಗಿಟ್ಟರೆ ನಾಶ ಖಂಡಿತ ಎನ್ನುವುದು ಆತನ ನಿಲುವು. ಹುಡುಗಿಯನ್ನು ಹೊರಡುವಂತೆ ಹೇಳುತ್ತಾನೆ. ಅವಳು ಹೋದ ಕೂಡಲೇ ಶಿಷ್ಯ ಭೋರೆಂದು ಗೋಳಾಡಿ ಅವಳ ಹಿಂದೆ ಹೋಗುತ್ತಾನೆ. ಕಡೆಗೊಂದು ದಿನ ವಾಪಸ್ಸು ಬರುತ್ತಾನೆ. ಪಶ್ಚಾತ್ತಾಪ, ಸಿಟ್ಟಿನಲ್ಲಿ ಭುಗಿಲೆದ್ದು ಹೇಳುತ್ತಾನೆ. ‘ ಅವಳಿಂದ ಬಯಸಿದ್ದು ಪ್ರೇಮವನ್ನು ಮಾತ್ರ. ಅವಳು ಬೇರೊಬ್ಬನೊಂದಿಗೆ ಹೊರಟು ಹೋದಳು. ಕಡೆಗೆ, ಅವಳನ್ನು ಕೊಂದು ಬಂದೆ’ ಎಂದು ನೆತ್ತರು ಒಣಗದ ಚಾಕು ತೋರಿಸುತ್ತಾನೆ.

ಎರಡು, ‘ನೀನು ಪ್ರಾಣಿಗಳಿಗೆ ಕಲ್ಲು ಕಟ್ಟಿ ಬಂದೆಯಲ್ಲ ಅವನ್ನು ಬಿಡಿಸು ಹೋಗು. ಬದುಕಿದ್ದರೆ ಬಚಾವಾದೆ, ಸತ್ತು ಹೋಗಿದ್ದಾರೆ ನಿನ್ನ ಜೀವನ ಪರ್ಯಂತ ಆ ಕಲ್ಲಗಳನ್ನು ಎದೆಯೊಳಗೆ ಹೊತ್ತುಕೊಂಡು ಓಡಾಡಬೇಕು’ ಎನ್ನುತ್ತಾನೆ. ಶಿಷ್ಯ ಆಶ್ರಮಕ್ಕೆ ಹೇಗೆ ಬಂದ ಗೊತ್ತಿಲ್ಲ. ಬಂದವನು ಆಡುತ್ತಾ ಆಡುತ್ತಾ ನೀರಿನಲ್ಲಿದ್ದ ಕಪ್ಪೆಗೆ, ಮೀನಿಗೆ, ನೀರ ಹೊರಗಿದ್ದ ಹಾವಿಗೆ ಕಲ್ಲು ಕಟ್ಟಿ ಬಿಟ್ಟು ಬರುತ್ತಾನೆ. ನೋಡಿದ ಗುರು ಮಲಗಿದ್ದ ಶಿಷ್ಯನಿಗೆ ಕಲ್ಲು ಕಟ್ಟುತ್ತಾನೆ.

ಎದ್ದು ಓಡಾಡಲಾಗದೆ ಕಲ್ಲು ಬಿಚ್ಚು ಎಂದು ಗೋಳಾಡುವ ಶಿಷ್ಯನಿಗೆ ಗುರು ಮೇಲಿನ ಮಾತುಗಳನ್ನು ಹೇಳುತ್ತಾನೆ. ನೋಡಿದರೆ ಹಾವು ಮೀನುಗಳೆರಡೂ ಸತ್ತು ಹೋಗಿರುತ್ತವೆ. ಕಪ್ಪೆ ಬದುಕಿರುತ್ತದೆ. ಮಗು ಕಣ್ಣೀರಿಟ್ಟು ದುಃಖಿಸುತ್ತದೆ. ದೊಡ್ಡವನಾದ ಹುಡುಗ ಕೊಲೆಗಡುಕನಾಗುತ್ತಾನೆ. ಅವನಿಗೆ ಮಹಾಯಾನದ ಪ್ರಜ್ಞಾಪಾರಮಿತ ಸೂತ್ರವನ್ನು ಕೈಯಾರೆ ಕಲಿಯುವಂತೆ ಮಾಡುತ್ತಾನೆ. ಬೌದ್ಧರ ಯಶಸ್ಸು ಇರುವುದು ಶಿಕ್ಷಣವನ್ನು ಕೈಗಳ ಮೂಲಕ ಕಲಿಸುವುದರಲ್ಲಿ ಇರಬೇಕು.

ಅನುಭವದಿಂದ ಕಲಿಯುವ ವಿದ್ಯೆಗೆ ತಾಳಿಕೆ ಗುಣ ಹೆಚ್ಚು. ಕಲಿಸುವ ಬೌದ್ಧ ಗುರುಗಳು ಕರುಣೆಯನ್ನೂ ತುಂಬಲು ನೋಡುತ್ತಾರೆ. ಅದು ಎಲ್ಲ ಸಾರಿ ಫಲ ನೀಡದು. ಕೊಲೆಗಾರ ಶಿಷ್ಯನನ್ನು ಪೊಲೀಸರು ಎಳೆದೊಯ್ಯಲು ಬರುತ್ತಾರೆ. ಪ್ರಜ್ಞಾಪಾರಮಿತ ಸೂತ್ರವನ್ನು ಬೆಕ್ಕಿನ ಬಾಲದಲ್ಲಿ ಅದ್ದಿ ಗುರು ಬರೆಯುತ್ತಾ ಹೋಗುತ್ತಾನೆ. ಶಿಷ್ಯ ಕೊಲೆಗೆ ಬಳಸಿದ ಚಾಕು ಹಿಡಿದು ಮರದ ಹಲಗೆಯ ಮೇಲಿನ ಅಕ್ಷರಗಳನ್ನು ಕೆತ್ತುತ್ತ ಹೋಗುತ್ತಾನೆ.

ಪೊಲೀಸನೊಬ್ಬ ಮೇಣದ ಬತ್ತಿ ಹಿಡಿದು ಕೆತ್ತಲು ಸಹಾಯ ಮಾಡುತ್ತಾನೆ. ಕೆತ್ತುತ್ತಲೇ ನಿದ್ದೆ ಹೋದ ಆರೋಪಿಗೆ ತನ್ನ ಕೋಟು ಬಿಚ್ಚಿ ಹೊದಿಸುತ್ತಾನೆ. ಅಕ್ಷರ ಕೆತ್ತಿದ್ದು ಮುಗಿದ ನಂತರ ಬೆಳಿಗ್ಗೆ ಶಿಷ್ಯನನ್ನು ಬೇಡಿ ತೊಡಿಸದೆ ಕರೆದೊಯ್ಯುತ್ತಾರೆ. ಶಿಷ್ಯನ ಜೊತೆಯಲ್ಲಿ ಬೆಕ್ಕೂ ಸಹ ಗುರುವನ್ನು ಬಿಟ್ಟು ಹೋಗುತ್ತದೆ. ಶಿಷ್ಯನನ್ನು ಎಳೆದೊಯದ್ದ ನಂತರ ಗುರು ದೋಣಿಯೊಳಗೆ ಬೆಂಕಿ ಹಚ್ಚಿಕೊಂಡು ದೇಹತ್ಯಾಗ ಮಾಡುತ್ತಾನೆ. ಬಿಡುಗಡೆಯಾದ ಶಿಷ್ಯ ಮರಳಿ ಬರುತ್ತಾನೆ. ತಾನು ಬಾಲ್ಯದಲ್ಲಿ ಕೊಂದಂತದೇ ಹಾವು ಕುಟೀರ ಸೇರಿರುತ್ತದೆ. ಸಂತನಾಗುವಿಕೆ ಅಲ್ಲಿಂದ ಶುರುವಾಗುತ್ತದೆ.

ಹೆಪ್ಪುಗಟ್ಟಿದ ಸರೋವರ. ಎಲೆ ಉದುರಿದ ಕಾಡು. ಮೌನವಾದ ಸೃಷ್ಟಿಯ ಒಂದು ಜಾವ ಅಳುವ ಹಸುಗೂಸನ್ನು ಹೊತ್ತ ಮುಖ ಮುಚ್ಚಿಕೊಂಡ ಹೆಣ್ಣೊಬ್ಬಳು ಆಶ್ರಮಕ್ಕೆ ಬರುತ್ತಾಳೆ. ಮಗುವನ್ನು ಆಶ್ರಮದಲ್ಲಿ ಬಿಟ್ಟು ನಡೆಯತೊಡಗುತ್ತಾಳೆ. ಮಂಜು ಗಡ್ಡೆ ಕರಗಿದ್ದ ಒಂದು ನೀರ ಕಂದರಕ್ಕೆ ಬಿದ್ದು ಸಾಯುತ್ತಾಳೆ. ಸಂತನಾಗುವವ ಹೋಗಿ ನೋಡಿದರೆ ಹೆಂಗಸಿನ ಬದಲು ಬುದ್ಧನ ವಿಗ್ರಹ ಸಿಗುತ್ತದೆ. ಮಗು ಚಟುವಟಿಕೆಯಿಂದ ಓಡಾಡತೊಡಗುತ್ತದೆ.

ಅದೂ ಕೂಡ, ಮೀನು, ಹಾವು ಮತ್ತು ಕಪ್ಪೆಯ ಬಾಯಿಗೆ ಕಲ್ಲು ತುರುಕಿ ಗಹಗಹಸಿ ನಗುತ್ತದೆ. ಇದು ಸಿನಿಮಾ. ಮಜೀದಿಯ ಮಕ್ಕಳು ದೇವದೂತರು.ವಿಶ್ವ ಮಾನವರು. ಕಿಮ್ ತೋರಿಸುವ ಮಕ್ಕಳೊಳಗೆ ನಿಸರ್ಗದ ಚಲನೆಯನ್ನು ಕಟ್ಟಿ ಹಾಕುವ, ಕೊಂದು ಖುಷಿಪಡುವವರು. ಮಜೀದಿ ದೊಡ್ಡವರ ಸಣ್ಣತನ ಮಕ್ಕಳಾಗುವ ಪ್ರಕ್ರಿಯೆಯಲ್ಲಿ ಅಳಿದು ಹೋಗುತ್ತದೆ ಎನ್ನುತ್ತಾನೆ.

ಕಿಮ್ ಮಕ್ಕಳು ಬದುಕನ್ನು ಸ್ಪರ್ಶಿಸಿ ದಾರ್ಶನಿಕರಾಗಬೇಕು, ಜ್ಞಾನ ಎಂಬುದು ಸುಖಾಸುಮ್ಮನೆ ದಕ್ಕುವುದಿಲ್ಲ ಎನ್ನುತ್ತಾನೆ. ಜ್ಞಾನವಿಲ್ಲದ ಮಗುತನ ಉಪಯೋಗವಿಲ್ಲದ್ದು. ಅದು ಮಾಡುವ ಕ್ರೌರ್ಯದ ಭಾರ ಹಗುರವಾದದ್ದೇನೂ ಅಲ್ಲ ಎಂಬುದು ಕಿಮ್ ನಿಲುವು.

ಕಿಮ್ ಇದಿಷ್ಟನ್ನೂ ಋತುಗಳ ಪಲ್ಲಟಗಳ ರೂಪಕದ ಮೂಲಕ ವಿವರಿಸುತ್ತಾನೆ. ಮೋಕ್ಷ ಎನ್ನುವುದು ಸ್ವಂತ ಅನುಭವವಿಲ್ಲದೆ ಉಪದೇಶಗಳಿಂದ ಬರಲಾರದು ಎನ್ನಿಸುತ್ತದೆ. ಬುದ್ಧನೂ ಅನುಭವಗಳ ಮೂಲಕವೇ ಲೋಕ ಸಂಗತಿಗಳನ್ನು ವಿವರಿಸಿದ. ಜತೆಗೆ ಪತಿತನಾಗದೆ ಮನುಷ್ಯ ಪಾವನನಾಗಲಾರನೆ? ಎಂಬೊಂದು ಪ್ರಶ್ನೆಯನ್ನು ಸಿನಿಮಾ ತಣ್ಣಗೆ ಕೇಳುತ್ತದೆ. ಮನುಷ್ಯನಾಳದ ಹಿಂಸೆ ಭೀಕರ ತಾರಕ ಮುಟ್ಟದೆ ಸಾಕ್ಷಾತ್ಕಾರ ಸಾಧ್ಯವಿಲ್ಲವೇ? ಎಂಬ ಪ್ರಶ್ನೆ ಹುಟ್ಟುತ್ತದೆ. ಬುದ್ಧ ಗುರುವೇ ಉತ್ತರ ಹೇಳಬೇಕು.

‘ದ ನೆಟ್’ ಸಿನಿಮಾದ ವಸ್ತು ಯುರೋಪಿಗೆ ಹೊಸತಲ್ಲ. ರಾಷ್ಟ್ರವಾದದ ಗಾಯಗಳು ಯುರೋಪನ್ನು ಮಾಗಿಸಿವೆ. ಆದರೆ ಒಂದೇ ತಾಯ ಮಕ್ಕಳಾದ ಉತ್ತರ, ದಕ್ಷಿಣ ಕೊರಿಯಾದಂತಹ ಪ್ರಾಚೀನ ಬೌದ್ಧ ರಾಷ್ಟ್ರಗಳು ಇದನ್ನು ಹೇಗೆ ನಿಭಾಯಿಸಬೇಕೆಂದು ತೋಚದೆ ಒದ್ದಾಡುತ್ತಿವೆ.

ಉಭಯ ರಾಷ್ಟ್ರಗಳ ಸೈದ್ಧಾಂತಿಕ ಕಲಹಗಳು, ನಿಷ್ಠೆಗಳು ಮನುಷ್ಯನನ್ನು ಹುಳುವಿನಂತೆ ಹೊಸಕಿ ಹಾಕುವುದರ ಕುರಿತು ಸಿನಿಮಾ ಮಾತನಾಡುತ್ತದೆ. ಅತ್ಯಂತ ದಾರಿದ್ರ್ಯದಲ್ಲಿರುವ ಕಮ್ಯುನಿಸಂನ ಹೆಸರಿನಲ್ಲಿ ಸರ್ವಾಧಿಕಾರಿ ಆಳುತ್ತಿರುವ ಉತ್ತರ ಕೊರಿಯಾದ ಮೀನುಗಾನೊಬ್ಬನ ದೋಣಿ ಗಾಳಿಗೆ ಸಿಲುಕಿ ದಕ್ಷಿಣ ಕೊರಿಯಾ ಭಾಗಕ್ಕೆ ಹರಿದು ಬಿಡುತ್ತದೆ.

ಒಂದು ಜುಜುಬಿ ಕೆರೆಯೂ ರಾಷ್ಟ್ರ ರಾಷ್ಟ್ರಗಳ ನಡುವೆ ಹರಿದು ಹೋಗಿರುತ್ತದೆ. ಮೀನುಗಾರನನ್ನು ದಕ್ಷಿಣದ ಸೈನಿಕರು ಬಂಧಿಸುತ್ತಾರೆ. ಭೀಕರ ಹಿಂಸೆ ನೀಡುತ್ತಾರೆ. ಕಡೆಗೆ, ಉತ್ತರ ಕೊರಿಯಾ ಕುಟುಂಬ ಮೂಲದ ದಕ್ಷಿಣ ಕೊರಿಯಾದ ತರುಣ ಸೈನಿಕನೊಬ್ಬ ಮೀನುಗಾರನ ನೆರವಿಗೆ ಬರುತ್ತಾನೆ. ಹಾಗಾಗಿ ಮೀನುಗಾರ ಸಾಯದೆ ಉಳಿದುಕೊಳ್ಳುತ್ತಾನೆ. ಹೊರಗಿನವರನ್ನು ಗೂಢಾಚಾರರೆಂದು ವಿಚಾರಿಸುವ ವೇಳೆ ನೀಡುವ ಭೀಕರ ಹಿಂಸೆ ಎದೆ ನಡುಗಿಸುತ್ತದೆ. ಅನೇಕರು ನಾಲಿಗೆಯನ್ನು ತಿರುಗಿಸಿ ನರ ಕಡಿದುಕೊಂಡು ಸತ್ತು ಬೀಳುತ್ತಾರೆ ಹಿಂಸೆ ತಾಳದೆ.

ಮೀನುಗಾರ ಅಮಾಯಕನೆಂದು ದಕ್ಷಿಣದವರಿಗೆ ಅರ್ಥವಾಗುತ್ತದೆ. ಅದಾದ ನಂತರ ಆತನಿಗೆ ದಕ್ಷಿಣ ರಾಷ್ಟ್ರದ ವೈಭವೋಪೇತ ನಗರ ತೋರಿಸಬೇಕೆಂಬ ತಂತ್ರ ಹೊಳೆಯುತ್ತದೆ. ಶತ್ರು ದೇಶದ ಮನುಷ್ಯನಿಗೆ ತನ್ನ ಸಾಹುಕಾರಿಕೆ ತೋರಿಸಬೇಕೆಂಬುದು ಯುದ್ಧ ತಂತ್ರ ಹಾಗೂ ಕ್ರೌರ್ಯದ ಇನ್ನೊಂದು ಮುಖ. ನೋಡಲು ಮೀನುಗಾರ ನಿರಾಕರಿಸುತ್ತಾನೆ. ನಗರದ ಝಗಮಗಿಸುವ ವೈಭವ ನೋಡಲಾರೆನೆಂದು ಮುಖ ಮುಚ್ಚಿಕೊಳ್ಳುತ್ತಾನೆ.

ದಕ್ಷಿಣದವರು ಹೆಣ್ಣು ಮಕ್ಕಳನ್ನು ಮಾರಿ, ತಲೆ ಹಿಡಿದು ನಗರಗಳನ್ನು ಕೊಬ್ಬಿಸಿದ್ದಾರೆ ಎಂಬುದು ಆತನ[ ಉತ್ತರದವರ] ಅಭಿಪ್ರಾಯ. ಇದು ಬಂಡವಾಳಿಗ ದೇಶಗಳ ಕುರಿತಾದ ಕಠೋರ ವಿಮರ್ಶೆ. ಅನ್ನವಿಲ್ಲದೆ ಬಡತನದಲ್ಲಿ ಜನರು ಸಾಯುವ ಚಿತ್ರಣ ಕಮ್ಯುನಿಸ್ಟ್ ಉತ್ತರ ಕೊರಿಯಾದ ಕುರಿತ ವಿಮರ್ಶೆ. ಮೀನುಗಾರನನ್ನು ನಡು ಬೀದಿಯಲ್ಲಿ ಬಿಟ್ಟು ಸೈನಿಕರು ಹಿಂಬಾಲಿಸ ತೊಡಗುತ್ತಾರೆ. ಆತ ಕಣ್ಣು ಮುಚ್ಚಿಕೊಂಡು ಓಡತೊಡಗುತ್ತಾನೆ.

ದಕ್ಷಿಣದವರ ಶ್ರೀಮಂತಿಕೆ ಸೆಳೆದುಬಿಟ್ಟರೆ ಎಂಬ ಭಯ ಅವನದು. ಕಡೆಗೆ ದಿಕ್ಕುಗಾಣದೆ ಬೀದಿ ಬೀದಿಯಲ್ಲಿ ಅಲೆಯುತ್ತಾನೆ. ಹಂದಿಯ ಸೂಪನ್ನು ಜೀವನದಲ್ಲಿ ನೋಡಿಯೇ ಇಲ್ಲವೇನೋ ಎಂಬಂತೆ ಕುಡಿಯುತ್ತಾನೆ. ನಗರದ ವೈಭವ ನೋಡಿ ಬೆರಗಾಗುತ್ತಾನೆ. ಕಡೆಗೆ ತರುಣ ಸೈನಿಕನ ಉಸ್ತುವಾರಿಯೊಳಗೆ ಆತ ದಕ್ಷಿಣದವರ ಕುರಿತು ತುಸು ಉದಾರಿಯಾಗುತ್ತಾನೆ. ತರುಣ ಹೊಸ ಬಟ್ಟೆಯನ್ನು, ಒಂದಿಷ್ಟು ಹಣವನ್ನು ಕೊಡುತ್ತಾನೆ. ಕಡೆಗೊಂದು ದಿನ ಉತ್ತರದ ಗಡಿಯೊಳಗೆ ಆತನನ್ನು ಬಿಟ್ಟು ಬಿಡುತ್ತಾರೆ.

ಈಗ ಉತ್ತರದ ಸೈನಿಕರ ಗೂಢಾಚಾರಿಕೆ ಶುರುವಾಗುತ್ತದೆ. ತರುಣ ಸೈನಿಕ ನೀಡಿದ್ದ ಹಣವನ್ನು ಮೀನುಗಾರ ತನ್ನ ಗುದದ್ವಾರದೊಳಗೆ ಬಚ್ಚಿಟ್ಟುಕೊಳ್ಳುತ್ತಾನೆ. ಉತ್ತರದವರಿಗೆ ಈತ ಗೂಢಾಚಾರನಾಗಿ ಬದಲಾಗಿರಬಹುದೇ ಎಂಬ ಅನುಮಾನ. ಜೊತೆಗೆ ಆತ ತಂದಿರಬಹುದಾದ ಹಣದ ಬಗ್ಗೆ ಆಸೆ. ಅಲ್ಲಿನ ಸೈನ್ಯದ ಸ್ಥಳೀಯ ಮುಖಂಡ ಮೀನುಗಾಗರನನ್ನು ಹಿಂಬಾಲಿಸುತ್ತಾನೆ. ಕಡೆಗೆ ಆತ ಮಲ ವಿಸರ್ಜನೆ ಮಾಡಿದ ನಂತರ ಮಲ ಕೆದಕಿ ಹಣವನ್ನು ತೆಗೆದುಕೊಳ್ಳುತ್ತಾನೆ.

ಇದು ಉತ್ತರ ಕೊರಿಯಾದ ಸೈನಿಕರ ಭ್ರಷ್ಟತೆ. ಅವನಿಗೆ ಮೀನು ಹಿಡಿಯಲೂ ಬಿಡದೆ ಕಿರುಕುಳ ನೀಡುತ್ತಾರೆ. ಇತ್ತ ಹೊಟ್ಟೆಗೂ ಇಲ್ಲ. ಸೈನಿಕರ ಕಿರುಕುಳ ಬೇರೆ. ಮೀನುಗಾರ ಪ್ರತಿಭಟಿಸುತ್ತಾನೆ. ಕಡೆಗೆ ತಲ್ಲಣಗೊಳಿಸುವ ಹಸಿವು ಸೈನ್ಯದ ಆಜ್ಞೆ ಧಿಕ್ಕರಿಸುವಂತೆ ಮಾಡುತ್ತದೆ. ದೋಣಿ ತೆಗೆದುಕೊಂಡು ನೀರಿಗಿಳಿಯುತ್ತಾನೆ. ಸೈನಿಕರು ಗುಂಡು ಹೊಡೆದು ಅವನನ್ನು ಕೊಲ್ಲುತ್ತಾರೆ. ಎಲ್ಲ ಸರ್ವಾಧಿಕಾರಿ ಪ್ರಭುತ್ವಗಳೂ ಮನುಷ್ಯನನ್ನು ನಿಕೃಷ್ಟವಾಗಿ ನೋಡುತ್ತವೆ. ಅದಕ್ಕೆ ರಾಷ್ಟ್ರ ಸಂರಚನೆ ಎಂಬುದು ನೆಪದ ಆಯುಧವಾಗಿರುತ್ತದೆ. ಸದಾ ಕೀಳರಿಮೆಯಲ್ಲಿ ಬದುಕುವ ಅದು ದ್ವೇಷ ಮತ್ತು ಗುಮಾನಿಗಳನ್ನು ತನ್ನ ಒಡಲೊಳಗಿಟ್ಟುಕೊಂಡು ಏಗುತ್ತಿರುತ್ತದೆ.

ಎರಡೂ ಸಿನಿಮಾಗಳು ವಿಭಿನ್ನ ದಿಕ್ಕುಗಳನ್ನು ವಿವರಿಸುವ ಕಲಾಕೃತಿಗಳು. ಒಂದು ರಾಷ್ಟ್ರಗಳ ನಡುವಿನ ಕ್ರೌರ್ಯವನ್ನು, ಗಡಿಗಳ ನೆಪದಲ್ಲಿ ನಡೆಯುವ ದಮನವನ್ನು ಕುರಿತು ಗೇಲಿ ಮಾಡುತ್ತದೆ. ಕಮ್ಯುನಿಸ್ಟ್ ದೇಶದ ಬಡತನ, ಭ್ರಷ್ಟ ಮತ್ತು ದುಷ್ಟ ಸರ್ವಾಧಿಕಾರಿ ಮಿಲಿಟರಿ ಆಡಳಿತದಂತೆಯೇ ದಕ್ಷಿಣ ಕೊರಿಯಾ ಪ್ರಜಾಪ್ರಭುತ್ವದ ಹೆಸರಲ್ಲಿ, ನಡೆಸುವ ಕ್ರೌರ್ಯ ಕೂಡ ಅತ್ಯಂತ ಭೀಕರ.

ಮನುಷ್ಯನ ಮನಸ್ಸನ್ನು ಪಲ್ಲಟಗೊಳಿಸುವ ಸಂಪತ್ತಿನ ಧಿಮಾಕು ಅಮಾನವೀಯ. ರಾಷ್ಟ್ರವಾದದ ಕ್ರೌರ್ಯ 21 ನೇ ಶತಮಾನದ ಏಷ್ಯಾದ, ಆಫ್ರಿಕಾಗಳ ನೆಲದಲ್ಲಿ ಮುಂದುವರೆಯುತ್ತಿದೆ. ಎರಡೂ ರಾಷ್ಟ್ರಗಳೂ ಅಮಾನವೀಯವೇ. ಕ್ರೂರ ಸ್ವಭಾವದವೆ. ಬೌದ್ಧ ಮಾರ್ಗವೆಂಬುದು ಅತ್ಯಂತ ಕೃತಕ ಇಲ್ಲಿ. ಇದು ರಾಜಕೀಯ ಕಥನ.

‘ಸ್ಪ್ರಿಂಗ್, ಸಮ್ಮರ್..’ ಆಧ್ಯಾತ್ಮದ ನಡುವಿನ ವಾಂಛೆಗಳ ರಾಜಕೀಯ ಕಥನ ಪಂಪನ ಆದಿ ಪುರಾಣದಂತೆ. ‘ದ ನೆಟ್’ ಸಿನಿಮಾ ರಾಜಕೀಯಕ್ಕೆ ಆಧ್ಯಾತ್ಮಿಕ ಸ್ಪರ್ಶ ಬೇಕು ಎಂದು ಬಯಸುವ ವಿಕ್ರಮಾರ್ಜುನ ವಿಜಯ. ಒಟ್ಟಾರೆ, ನೆಲದ ಬಯಕೆಯ ಕುರುಕ್ಷೇತ್ರದಲ್ಲಿ ಬಡವರ ಭಿನ್ನಪವ ಕೇಳಿದವರಿಲ್ಲ.

ಕಡೆಯದಲ್ಲದ ಮುಖ್ಯ ಮಾತು; ಇಂಥ ಸಿನಿಮಾಗಳನ್ನು ನೀಡಿದ ಕಿಮ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಮೂವರು ಹೆಣ್ಣು ಮಕ್ಕಳು ಮೀಟೂ ಚಳುವಳಿಯಲ್ಲಿ ಭಾಗವಹಿಸಿ ಕೋರ್ಟಿಗೆ ಹೋಗಿದ್ದರು. ಕೋರ್ಟು ಆತನಿಗೆ ದಂಡ ಹಾಕಿ ಖುಲಾಸೆ ಮಾಡಿತು. ದಿಕ್ಕೆಡಿಸುವ ಸಿನಿಮಾ ಮಾಡಿದ ಕಿಮ್ ಸ್ವತಃ ಗಂಡಿನ ಠೇಂಕಾರದ ಮೂಟೆಯಾಗಿದ್ದನೇ ಎಂಬೊಂದು ಪ್ರಶ್ನೆಯನ್ನೂ ಉಳಿಸಿ ಹೋಗಿದ್ದಾನೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

Published

on

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.

2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.

ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.

ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.

ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)

ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.

ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.

ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.

ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.

ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್‌ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending