ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಹಿಳಾ ಕ್ಷೇತ್ರದಲ್ಲಿ ಆದರ್ಶವಾದ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಹಸ ಪ್ರದರ್ಶಿಸಿ ಹೋರಾಡಿದ ಮಹಿಳೆಗೆ 2019-20 ನೇ ಸಾಲಿಗೆ ವೀರ ಮಹಿಳೆ ಪ್ರಶಸ್ತಿಯನ್ನು ನೀಡಲು ಅರ್ಹ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಲೆ, ಕ್ರೀಡೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸ್ವಯಂಸೇವಾ ಸಂಸ್ಥೆಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜೊತೆಗೆ ಸಾಹಸ ಪ್ರದರ್ಶಿಸಿ ಹೋರಾಡಿದ ಮಹಿಳೆಯರಿಗೆ ವೀರಮಹಿಳೆ ಪ್ರಶಸ್ತಿಯನ್ನು ಸಹ ನೀಡಲು ಸರ್ಕಾರ ನಿರ್ಧರಿಸಿದೆ.
ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಚೇರಿ, ದಾವಣಗೆರೆ ಇವರಿಂದ ಪಡೆದು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ, ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಉಪನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ.ಬಿ ಬ್ಲಾಕ್, ದಾವಣಗೆರೆ ದೂ.ಸಂ: 08192-264056 ಇಲ್ಲಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು 2020 ರ ಜನವರಿ 18 ಕಡೆಯ ದಿನವಾಗಿರುತ್ತದೆ.
ವೀರಮಹಿಳೆ ಪ್ರಶಸ್ತಿಗೆ ಷರತ್ತುಗಳು
18 ರಿಂದ 45 ವಯೋಮಿತಿಯೊಳಗಿನ ಒಬ್ಬ ಮಹಿಳೆಯು ಆಪತ್ಕಾಲದಲ್ಲಿರುವ ಮತ್ತೊಬ್ಬ ವ್ಯಕ್ತಿಯ ಜೀವ ಕಾಪಾಡುವಲ್ಲಿ ಅಥವಾ ಪ್ರಾಣ ರಕ್ಷಿಸುವಲ್ಲಿ ತನ್ನ ಜೀವದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಧೈರ್ಯ, ಸಾಹಸದೊಂದಿಗೆ ಅಪಾಯದಲ್ಲಿರುವ ವ್ಯಕ್ತಿಯ ಜೀವ ಕಾಪಾಡುವಂತಹ ಕಾರ್ಯವನ್ನು ಮಾಡಿದ್ದಲ್ಲಿ ಅಂತಹ ಮಹಿಳೆಯರನ್ನು ವೀರ ಮಹಿಳೆ ಎಂದು ಪರಿಗಣಿಸಬಹುದು.
ವೀರ ಮಹಿಳೆ ಪ್ರಶಸ್ತಿ ಪಡೆಯುವ ಮಹಿಳೆಯು ವಿಶೇಷ ಶೌರ್ಯ ಹಾಗೂ ಸಾಧನೆಯನ್ನು ಮಾಡಿರಬೇಕು. ತತ್ಸಂಬಂಧ ದಿನಪತ್ರಿಕೆ ಹಾಗೂ ಪೊಲೀಸ್ ಠಾಣೆಯ ವರದಿ ಪ್ರತಿ ಸಲ್ಲಿಸಬೇಕು. ಈ ಸಾಧನೆಯು ಸಾರ್ವಜನಿಕರ ಗಮನಕ್ಕೆ ಬಂದಿರಬೇಕು ಹಾಗೂ ಈ ಸಾಧನೆಯು ಪ್ರಶಸ್ತಿ ಪಡೆಯುವ ಹಿಂದಿನ ವರ್ಷದ ಜನವರಿ 01 ರಿಂದ ಡಿಸೆಂಬರ್ 31 ರೊಳಗೆ ಇರಬೇಕು. ಈ ಪ್ರಶಸ್ತಿಗಾಗಿ ಸಂಬಂಧಿಸಿದ ಮಹಿಳೆಯ ತಂದೆ, ತಾಯಿ, ಪೋಷಕರು ಅರ್ಜಿಯನ್ನು ಸಲ್ಲಿಸಬಹುದು.
ವೀರ ಮಹಿಳೆ ಪ್ರಶಸ್ತಿಗಾಗಿ ರಾಜ್ಯ ವತಿಯಿಂದ ಒಬ್ಬ ಮಹಿಳೆಗೆ ಮಾತ್ರ ರೂ.25,000 ಗಳ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಇದನ್ನು ಪ್ರತಿ ವರ್ಷ ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆಯಂದು ನೀಡಲಾಗುವುದು.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಆಯ್ಕೆಗಾಗಿ ನಿಗದಿಪಡಿಸಿರುವ ಷರತ್ತು
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ದಿಗಾಗಿ ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಾದ ಕ್ರೀಡಾ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲೂ ವ್ಯಕ್ತಿಗಳು ಕೈಗೊಂಡ ಕಾರ್ಯಕ್ರಮಗಳ ನಿರ್ವಹಣೆಯ ಗುಣಮಟ್ಟವನ್ನು ಆಧಾರವಾಗಿಟ್ಟುಕೊಳ್ಳಲಾಗುತ್ತದೆ.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆ ಮತ್ತು ಆಯ್ಕೆಗೆ ಸಂಬಂಧಿಸಿದಂತೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
ಈ ಪ್ರಶಸ್ತಿ ಪ್ರದಾನವನ್ನು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಅಥವಾ ಸರ್ಕಾರವು ನಿಗದಿಪಡಿಸುವ ದಿನಾಂಕ ಹಾಗೂ ಸ್ಥಳದಲ್ಲಿ ಏರ್ಪಡಿಸಲಾಗುವುದು. ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿಗಳು ಪ್ರಶಸ್ತಿಗಳನ್ನು ಖುದ್ದಾಗಿ ಪಡೆಯಬೇಕು ಹಾಗೂ ಸಂಘ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯನ್ನು ಸಂಘದ ಪದಾಧಿಕಾರಿಗಳು ಸ್ವೀಕರಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243