/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ತೊಗೋಳಿ, ಇವನದೊಂದು ನೆನಪು ಬರೆಯುವ ಸರದಿ ಬಂದಿದೆ

Published

on

  • ಕೇಸರಿ ಹರವೂ

ಕೃಷ್ಣ ನಾಡಿಗ ನನಗಿಂತ ಎಂಟೊಭತ್ತು ವರ್ಷಕ್ಕೆ ದೊಡ್ಡವ. ಆದರೂ ‘ಹೋಗೋಲೋ, ಬಾರೋಲೋ’ ಗೆಳೆಯರಾಗಿದ್ವಿ. ನಾನು ಇವನನ್ನು ಮೊದಲು ಕಂಡಿದ್ದು 1983ರಲ್ಲಿ. ಆಗತಾನೇ ಕಾಲೇಜು ಮುಗಿಸಿ, ಕಲಾಕ್ಷೇತ್ರದಲ್ಲೂ ಒಂದಷ್ಟು ಮೊಳೆ ಹೊಡೆದು ಚಿತ್ರನಿರ್ದೇಶನವನ್ನು ಪ್ರಾತ್ಯಕ್ಷಿಕವಾಗಿ ಕಲಿಯುವ ದೆಸೆಯಿಂದ ಗಾಂಧೀನಗರ ಅಲೆಯುತ್ತಿದ್ದೆ. ಹಾಗೊಮ್ಮೆ ಆನಂದರಾವ್ ವೃತ್ತದ ಸಂಗೀತಾ ಹೋಟೆಲಿನ ರೂಮೊಂದರಲ್ಲಿ ನಿರ್ದೇಶಕ ಕೆ.ವಿ. ಜಯರಾಂ ತಮ್ಮ ಮುಂದಿನ ಚಿತ್ರಕ್ಕೆ ತಯಾರಿ ನಡೆಸಿದ್ದರು. ಅಲ್ಲಿ ನಾಡಿಗ ಪ್ರೊಡಕ್ಷನ್ ಮ್ಯಾನೇಜರ್.

ಜಯರಾಂ ‘ತಮ್ಮಲ್ಲಿ ಈಗಾಗಲೇ ನಾಲ್ಕು ಜನ ಸಹಾಯಕರಿದ್ದಾರೆ, ಮುಂದಿನ ಚಿತ್ರದಲ್ಲಿ ನೋಡೋಣ’ ಎಂದು ಹೇಳಿದ್ದರು. ಸರಿ, ಎಂದು ನಾನು ಹೊರಗೆ ಕಾರಿಡಾರಿನಲ್ಲಿ ನಡೆಯುತ್ತಿದ್ದಾಗ ಒಳಗೆ ಕುಳಿತಿದ್ದ ನಾಡಿಗ ಅದೇ ರೂಮಿಂದ ಹೊರಬಂದು ‘ಲೇ, ತಡಿಯೋ’ ಎನ್ನುತ್ತಾ ನನ್ನನ್ನು ಸೇರಿಕೊಂಡ.

‘ಈತ ಪರಿಚಯವೇ ಇಲ್ಲ, ಈಗಲೇ ಏಕವಚನವೇ? ಇದೆಂಥಾ ಚಿತ್ರರಂಗವಯ್ಯಾ!’ ಎಂದು ನನ್ನ ಈಗೋನೋ, ಸ್ವಾಭಿಮಾನವೋ ಕೆಣಕಿತ್ತು. ಹತ್ತಿರ ಬಂದವನೇ ಹಠಾತ್ತನೆ ನನ್ನ ಹೆಗಲ ಮೇಲೆ ಕೈಹಾಕಿ ‘ಬಾ, ಕೆಳಗಡೆ ಕಾಫಿ ಕುಡಿಯೋಣ’ ಎಂದು ನನ್ನನ್ನು ಎಳೆದುಕೊಂಡು ನಡೆಯತೊಡಗಿದ. ನನ್ನ ಮುಖಭಾವದಿಂದ ಅವನಿಗೆ ನನ್ನೊಳಗೆ ಏನೇನೆಲ್ಲಾ ನಡೆದಿದೆ ಎಂದು ಸ್ಪಷ್ಟವಾಗಿ ತಿಳಿದಿತ್ತೆಂದು ಕಾಣುತ್ತದೆ.

ಕಾಫಿ ಕುಡಿಯುವಾಗ ಹೇಳಿದ, ‘ಹಂಗೆ ಮಾತಾಡಿಸಿದ್ದು ನಿನಗೆ ಗುರ್ ಅಂದಿರಬೇಕು, ಅಲ್ವಾ? ನಾನು ನೀನೂ ಇದೇ ಚಿತ್ರರಂಗದಲ್ಲಿ ಕೆಲವು ದಶಕಗಳ ಕಾಲ ಒಳ್ಳೇ ಗೆಳೆಯರಾಗಿ ಜೊತೆಗಿರ್ತೀವಿ ಕಣೋ, ತುಂಬಾ ಜನರ ಜೊತೆ ಹಂಗನಿಸಲ್ಲ, ಅದಿಕ್ಕೆ ಹಂಗನ್ದೇ…” ಎಂದು ಅಜ್ಜಂಪುರದ ಜವಾರೀ ಬ್ರಾಹ್ಮಣ ಭಾಷೆಯಲ್ಲಿ, ದೊಡ್ಡ ಗಂಟಲಿನಲ್ಲಿ ಗಹಗಹಿಸಿದ್ದ. ಸಿಗರೇಟು ಸೇದುವಾಗ ನಾನೂ ಅವನನ್ನು ಆಗಿನಿಂದಲೇ ಏಕವಚನದಲ್ಲೇ ಕರೆಯುವಂತೆ ಮಾಡಿದ್ದ.
ಅನಂತರದ ಹತ್ತಾರು ವರ್ಷ ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದೆವಾದರೂ ಒಂದೇ ಚಿತ್ರದಲ್ಲಿ ಕೆಲಸ ಮಾಡಲೇ ಇಲ್ಲ.

ಮಾತಿಗೆ ಸಿಕ್ಕಾಗಲೆಲ್ಲಾ ‘ನಿನ್ನ ಅಂತಃಶಕ್ತಿ ನಿನಗೇ ಗೊತ್ತಿಲ್ಲ ಕಣೋ’ ಎಂದು ಹೇಳುತ್ತಲೇ ಇರುತ್ತಿದ್ದ. ‘ಯಾರಿಗೂ ಗೊತ್ತಿರಲ್ಲ ಬಿಡೋ, ನಿನಗೆ ನಿನ್ನ ಶಕ್ತಿ ಗೊತ್ತಿದೆಯಾ?’ ಎನ್ನುತ್ತಿದ್ದೆ ನಾನು. ಇನ್ನೂ ಕೆಲವೊಮ್ಮೆ ‘ನನಗೆ ಚೆನ್ನಾಗಿ ಗೊತ್ತಿದೆ, ಬೇರೇಯವರಿಗೆ ಅದನ್ನು ಅರಗಿಸಿಕೊಳ್ಳೋ ವೈಶಾಲ್ಯ ಇಲ್ಲ’ ಎನ್ನುತ್ತಿದ್ದೆ. ‘ಬಡ್ಡೀಮಗನೇ, ಅದಿಕ್ಕೇ ನೀನು ನೀನೇ…’ ಎನ್ನುತ್ತಿದ್ದ. ಹೊಗಳಿಕೆ ಮಾತುಗಳು ಅವನಿಂದ ಹೊರಕ್ಕೆ ಸಹಜವಾಗಿ ಹರಿಯುತ್ತಿದ್ದವು. ನನಗೆ ಬಹಳ ಕಷ್ಟ.
ಕೆಲವು ಬಾರಿ ‘ಮನೇಲಿ ನನ್ನ ಹೆಂಡತಿ ಅಡಿಗೆಮನೆ ಡಬ್ಬೀನೆಲ್ಲಾ ನೀಟಾಗಿ ತೊಳೆದು ಹೊರಗೆ ಬಿಸಿಲಿಗೆ ಒಣ ಹಾಕಿದಾಳೆ’ ಎನ್ನುತ್ತಿದ್ದ. ಚಿತ್ರರಂಗದ ಕೆಲವರು ‘ಇದು ಇವನ ಮಾಮೂಲಿ ಡೈಲಾಗು’ ಎಂದು ಹಿಂದೆ ಆಡಿಕೊಳ್ಳುತ್ತಿದ್ದರು ಕೂಡಾ.

ಆದರೆ ಅವರ ಪರಿಸ್ಥಿತಿಯೂ ಇವನಿಗಿಂತ ಒಂದಿಂಚೂ ಉತ್ತಮವಾಗಿರಲಿಲ್ಲ. ಹೇಳಿಕೊಳ್ಳಲು ಅವರಿಗೆ ಸಂಕೋಚವಿತ್ತೋ ಏನೋ!
ಕೆಲವು ವರ್ಷ್ಗಳ ನಂತರ ಅದ್ಯಾವಾಗಲೋ ಅವನು ಮ್ಯಾನೇಜರ್ ಕೆಲಸ ಬಿಟ್ಟು ಸ್ಕ್ರಿಪ್ಟ್ ರೈಟರ್ ಆಗಿದ್ದ. ಅವನು ಬರೆದ ಅನೇಕ ಸ್ಕ್ರಿಪ್ಟುಗಳು ಆ ಚಿತ್ರದ ನಿರ್ದೇಶಕನ ಹೆಸರಲ್ಲಿ ಟೈಟಲ್ ಕಾರ್ಡಿನಲ್ಲಿ ಇರುತ್ತಿದ್ದವು. ಅದೇ ಕಾಲದಲ್ಲಿ ಮಗಳ ಮದುವೆಯನ್ನು ಬಹಳ ಕಷ್ಟಪಟ್ಟು ಸರಳವಾಗಿ, ಆದರೆ ಸಾಂಪ್ರದಾಯಿಕವಾಗಿ ಮಾಡಿದ್ದ. ನನಗೂ ಆಹ್ವಾನಿಸಿದ್ದ. ನನಗೆ ಕೂಡಾ ಆಗ ಆರ್ಥಿಕವಾಗಿ ಅನನುಕೂಲ ಇದ್ದಿದ್ದು, ಬೇಕೆಂದೇ ಮದುವೆಗೆ ಹೋಗಿರಲಿಲ್ಲ.

ಫೇಸ್ಬುಕ್ಕಿನಲ್ಲಿ ನಾನು ಬಲಪಂಥೀಯತೆಯ ಬಗ್ಗೆ ಅಸಹನೆಯಿಂದ ಬರೆಯುತ್ತಿದ್ದಾಗಲೆಲ್ಲಾ ಅವನಿಗೆ ನನ್ನ ಮೇಲೆ ಸಿಟ್ಟು ಬರುತ್ತಿತ್ತೇನೋ! ಅಮೇಲಾಮೇಲೆ ಅವನು ಬಹುಶಃ ನನ್ನ ಪೋಸ್ಟುಗಳನ್ನು ನೋಡುವುದನ್ನೇ ಬಿಟ್ಟಿದ್ದನೇನೋ. ಆ ನಂತರ ನಾವು ಭೇಟಿ ಮಾಡಿದ್ದು ಬಹಳ ಕಡಿಮೆ. ಆಗಾಗ ಫೋನು ಮಾಡುತ್ತಿದ್ದವನು ಅದನ್ನೂ ಬಿಟ್ಟಿದ್ದ. ಬಿಡುವಿಲ್ಲವೆಂದೋ, ಅಥವಾ ಮೇಲಿನ ಕಾರಣಕ್ಕೋ ಗೊತ್ತಿಲ್ಲ.

ಆಮೇಲೆ ಮತ್ಯಾವಾಗಲೋ ಟಿವಿ ಧಾರಾವಾಹಿಗಳಲ್ಲಿ ನಟಿಸುವುದಕ್ಕೆ ಶುರು ಮಾಡಿದ್ದ. ಬಹುಶಃ ನಿರ್ದೇಶಕ ಕೆ.ಎಸ್.ಎಲ್. ಸ್ವಾಮಿ (ರವೀ) ಅವರು ತೀರಿಕೊಂಡ ನಂತರ ಅವರ ಜಾಗವನ್ನು ಸೀರಿಯಲ್ಲಿನವರು ಇವನ ಮೂಲಕ ತುಂಬಿಕೊಂಡಿದ್ದರೆಂದು ಅನಿಸುತ್ತದೆ. ಒಟ್ಟಲ್ಲಿ ಅವನ ಕೊನೆಯ ವರ್ಷಗಳಲ್ಲಿ ಸ್ವಲ್ಪ ಆರ್ಥಿಕವಾಗಿ ನೆಮ್ಮದಿಯಿಂದ ಇದ್ದನೇನೋ!
ಚಿತ್ರರಂಗಕ್ಕೆ ಬರುವಾಗ ಯಾರು ಯಾರು ತಮ್ಮ ಇಡೀ ಓದು, ಅನುಭವ, ಕಾಣ್ಕೆ ಮತ್ತು ಮಹತ್ವಾಕಾಂಕ್ಷೆ ಇಟ್ಟುಕೊಂಡು ಬರುತ್ತಾರೋ ಅಂಥವರನ್ನು ತನ್ನ ಜಿಗುಟಿಗೆ, ಜಿಡ್ಡಿಗೆ ಒಗ್ಗಿಸಿಕೊಂಡುಬಿಡುತ್ತೆ. ಬಂದಾದ ಮೇಲೆ ಅನಿವಾರ್ಯವಾಗಿ ಕೆಲವರು ಒಗ್ಗಿಯೂ ಬಿಡುತ್ತಾರೆ.

ಅಲ್ಲೋ ಅಥವಾ ಟಿವಿ ಮಾಧ್ಯಮದಲ್ಲೋ ಹಣ ಸಿಕ್ಕುವ ಕಸುಬನ್ನು ‘ಅವರಿಗೇನು ಬೇಕೋ ಅದನ್ನು ಕೊಡುತ್ತೇನೆ’ ಎಂದು ಬದುಕಿ ಹೀಗೆ ಕೊನೆಯಾಗುತ್ತಾರೆ. ಇಂತಹ ನೂರು ನಟನಟಿಯರು, ತಂತ್ರಜ್ಞರು, ಕಲಾವಿದರನ್ನು ನಾನು ತೋರಿಸುತ್ತೇನೆ ಬೇಕಾದರೆ. ನನ್ನಂತೆ ಕೆಲವೇ ಕೆಲವರು ಸೆಡ್ಡು ಹೊಡೆಯುತ್ತೇವೆ. ಹೊರಗೆ ಬರುತ್ತೇವೆ. ಪರ್ಯಾಯ ಕಟ್ಟುವ ಆಲೋಚನೆ ಮಾಡುತ್ತೇವೆ. ಸೋಲೋ ಗೆಲುವೋ ಮುಖ್ಯವಲ್ಲ, ಪ್ರಯತ್ನ ಮುಖ್ಯ ಎನ್ನುತ್ತೇವೆ. ನಾಡಿಗನಲ್ಲೂ ಆ ಶಕ್ತಿಯಿತ್ತು. ಆದರೆ ಅವನ ಬದುಕಿನ ಅನಿವಾರ್ಯಕ್ಕೋ, ಸಂಪ್ರದಾಯಸ್ಥ ಮನಸ್ಥಿತಿಗೋ ಅವನಲ್ಲಿ ಅದು ಸಾಧ್ಯವಾಗಲಿಲ್ಲ.
ಹೋಗೋ ಗೆಳೆಯಾ, ನಿನ್ನ ನೆನಪು ಸದಾ ಇರುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version