Connect with us

ದಿನದ ಸುದ್ದಿ

ದಾವಣಗೆರೆ | ಕೋವಿಡ್ ಹಿನ್ನೆಲೆ ನಷ್ಟ : ಸೇವಾ ಮನೋಭಾವದಿಂದ ರಾಜ್ಯಾದ್ಯಂತ ಕೆಎಸ್‍ಆರ್‍ಟಿಸಿ ಕಾರ್ಯಾಚರಣೆ : ಕೆ ಎಸ್ ಆರ್ ಟಿ ಸಿ ನಿಮಗ ಅಧ್ಯಕ್ಷ ಚಂದ್ರಪ್ಪ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೋವಿಡ್ ಹಿನ್ನೆಲೆಯಲ್ಲಿ ನಷ್ಟದಲ್ಲಿದ್ದರೂ ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಹಾಗೂ ಸೇವಾ ಮನೋಭಾವದಿಂದ ರಾಜ್ಯಾದ್ಯಂತ ಉತ್ತಮವಾಗಿ ಕಾರ್ಯಾಚರಣೆ ಮಾಡುತ್ತಿದೆ. ಸೇವಾ ಮನೋಭಾವವೇ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಚಂದ್ರಪ್ಪ ಹೇಳಿದರು.

ಶುಕ್ರವಾರ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿ ಡಿಪೋ ವೀಕ್ಷಣೆ ನಡೆಸಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯ ನೆರವು

ಕೆಎಸ್‍ಆರ್‍ಟಿಸಿ ಹಿಂದೆ ಲಾಭವೂ ಇಲ್ಲ. ನಷ್ಟವೂ ಇಲ್ಲವೆಂಬಂತೆ ಕಾರ್ಯಾಚರಣೆ ಮಾಡುತ್ತಿತ್ತು. ಕೋವಿಡ್ ಬಂದ ನಂತರ ರಾಜ್ಯಾದ್ಯಂತ ಅಂದಾಜು 1500 ಕೋಟಿ ನಷ್ಟ ಅನುಭವಿಸಿತು. ರಾಜ್ಯ ಸರ್ಕಾರ 1350 ಕೋಟಿ ಬಿಡುಗಡೆ ಮಾಡುವ ಮೂಲಕ ಅಧಿಕಾರಿ/ಸಿಬ್ಬಂದಿಗಳಿಗೆ ವೇತನ, ವಾಹನಗಳ ನಿರ್ವಹಣೆ ಮಾಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ನೌಕರರು ಉತ್ತಮವಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಂಸ್ಥೆ ನಷ್ಟದಲ್ಲಿದ್ದರೂ ಸರ್ಕಾರ ವೇತನ ನೀಡುತ್ತಿದ್ದು, ಮುಖ್ಯಮಂತ್ರಿಗಳು ಅಭಿನಂದನೀಯ ಎಂದರು.

ಅಂತರರಾಜ್ಯ ಕಾರ್ಯಾಚರಣೆ

ಅಂತರ ರಾಜ್ಯ ಬಸ್ ಕಾರ್ಯಾಚರಣೆ ಆರಂಭವಾಗಿದ್ದು ಗೋವಾ, ಆಂಧ್ರ ಮತ್ತು ಈಗ ಮಹಾರಾಷ್ಟ್ರಕ್ಕೂ ಅನುಮತಿ ದೊರೆತಿದೆ. ಇದೀಗ ಶೇ.50 ಆದಾಯ ಬರುತ್ತಿದೆ. ಖಾಸಗಿ ಸಂಸ್ಥೆಗಳು ನಷ್ಟದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಿಲ್ಲಿಸಿವೆ. ಆದರೆ ರಾಜ್ಯ ರಸ್ತೆ ಸಾರಿಗೆಯ ಉದ್ದೇಶ ಸೇವೆ ಆಗಿದೆ. ನಷ್ಟದಲ್ಲಿಯೂ ಕೆಲಸ ಮಾಡುತ್ತಿದ್ದು, ಉತ್ತಮ ಸೇವೆಗಾಗಿ ನಮ್ಮ ಸಂಸ್ಥೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ ಎಂದರು.

ಮೂಲಭೂತ ಸೌಕರ್ಯಕ್ಕೆ ಒತ್ತು

ಬಸ್ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳು, ಮಹಿಳೆಯರಿಗೆ ಶೌಚಾಲಯ ಸೇರಿದಂತೆ ಉತ್ತಮ ವ್ಯವಸ್ಥೆಗಳನ್ನು ಮಾಡಲಾಗುವುದು. ಜೊತೆಗೆ ರೈಲ್ವೇ ಮತ್ತು ವಿಮಾನ ನಿಲ್ದಾಣಗಳ ರೀತಿಯಲ್ಲಿ ಬಸ್‍ಗಳು ಇಷ್ಟೇ ಸಮಯಕ್ಕೆ ಬರುತ್ತವೆ ಎಂದು ಮಾಹಿತಿ ನೀಡುವ ಡಿಜಿಟಲ್ ಬೋರ್ಡ್‍ಗಳ ಅಳವಡಿಕೆ, ಗಣಕೀಕರಣ ವ್ಯವಸ್ಥೆ ಮಾಡಲಾಗುವುದು ಎಂದರು.

ಸಂಸ್ಥೆಗೆ ಸಾಲವಾದರೂ ಪರವಾಗಿಲ್ಲ. ನೌಕರರ ಮತ್ತು ಎಲ್ಲ ವರ್ಗದ ಜನರ ಹಿತ ಕಾಪಾಡುವುದು ಮುಖ್ಯ ಉದ್ದೇಶವಾಗಿದೆ. ಸದ್ಯ ಕೋವಿಡ್ ಹಿನ್ನೆಲೆಯಲ್ಲಿ ಹೊಸ ಬಸ್‍ಗಳು ಮತ್ತು ಮಾರ್ಗಗಳಿಗೆ ಅವಕಾಶ ಇಲ್ಲವಾಗಿದೆ ಎಂದರು.

ದಾವಣಗೆರೆ ನಗರದಲ್ಲಿ ಪ್ರಸ್ತುತ ಒಟ್ಟು 40 ಬಸ್ ಓಡಾಡುತ್ತಿದ್ದು, ರೈತರು ಹಾಲು, ತರಕಾರಿ ಇತರೆ ಸಾಗಿಸಲು ಅನುಕೂಲವಾಗುವ ದೃಷ್ಟಿಯಿಂದ ಸುತ್ತಮುತ್ತಲಿನ ಹಳ್ಳಿಗಳಿಗೆ ಬಸ್ ಕಾರ್ಯಾಚರಣೆ ವಿಸ್ತರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ದಾವಣಗೆರೆ ವಿಭಾಗದಲ್ಲಿ 21 ವೊಲ್ವೊ, 29 ರಾಜಹಂಸ, 06 ನಾನ್ ಎಸಿ ಸ್ಲೀಪರ್, 195 ಕರ್ನಾಟಕ ಸಾರಿಗೆ, 56 ನಗರ ಸಾರಿಗೆ ಸೇರಿದಂತೆ ಒಟ್ಟು 356 ಬಸ್‍ಗಳು ಕಾರ್ಯಾಚರಣೆ ಮಾಡುತ್ತಿವೆ. ವಿಭಾಗದಲ್ಲಿ ಒಟ್ಟು 1580 ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಸಿಬ್ಬಂದಿ ವೇತನ ತಿಂಗಳಿಗೆ ಸರಾಸರಿ ರೂ.574.86 ಲಕ್ಷ, ಇಂಧನ ವೆಚ್ಚ ರೂ.502.85 ಲಕ್ಷ ಮತ್ತು ಇತರೆ ಖರ್ಚು ಸೇರಿದಂತೆ ಸರಾಸರಿ ರೂ.1405.65 ಲಕ್ಷ ವೆಚ್ಚವಾಗುತ್ತದೆ ಎಂದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ರೂ.96 ಕೋಟಿ ಮೊತ್ತದಲ್ಲಿ ಆಧುನಿಕ ಮಾದರಿ ಬಸ್ ನಿಲ್ದಾಣ ನಿರ್ಮಾಣ ಮಾಡುವ ಯೋಜನೆಯು ನವೆಂಬರ್ 2020 ರಿಂದ ಪ್ರಾರಂಭವಾಗಲಿದೆ. ಪ್ರಸ್ತುತವಿರುವ ಬಸ್ ನಿಲ್ದಾಣವನ್ನು ಸ್ಥಳಾಂತರಿಸಲು ಹೈಸ್ಕೂಲ್ ಮೈದಾನದಲ್ಲಿ ರೂ.2.86 ಕೋಟಿ ಮೊತ್ತದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದ್ದು ಮುಕ್ತಾಯ ಹಂತದಲ್ಲಿರುತ್ತದೆ.

ದಾವಣಗೆರೆ ನಗರ ಪ್ರದೇಶದಲ್ಲಿರುವ ಬೇತೂರು ರಸ್ತೆಯಲ್ಲಿನ ಸಂಸ್ಥೆಯ ನಿವೇಶನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ರೂ.10.00 ಕೋಟಿ ಮೊತ್ತದಲ್ಲಿ ನಗರ ಸಾರಿಗೆ ಬಸ್ ನಿಲ್ದಾಣವನ್ನು ನಿರ್ಮಿಸುವ ಪ್ರಸ್ತಾವನೆ ಇದೆ. ದಾವಣಗೆರೆ ವಿಭಾಗೀಯ ಕಾರ್ಯಾಗಾರದಲ್ಲಿ ನಗರ ಸಾರಿಗೆ ಘಟಕ-2 ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಚನ್ನಗಿರಿ ನಗರದಲ್ಲಿ ಬಸ್ ಘಟಕ ನಿರ್ಮಾಣಕ್ಕೆ ಈಗಾಗಲೇ ನಿವೇಶನ ಮಂಜೂರಾಗಿದ್ದು ಎಸ್‍ಡಿಪಿ ಯೋಜನೆಯಡಿಯಲ್ಲಿ ಅಂದಾಜು ವೆಚ್ಚ ರೂ.8.00 ಕೋಟಿ ಮೊತ್ತದಲ್ಲಿ ಘಟಕ ನಿರ್ಮಾಣ ಮಾಡಲು ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿರುತ್ತದೆ.

ಚಿಕ್ಕಮಗಳೂರು ಮಾರ್ಗ ಬಸ್ ಉದ್ಘಾಟನೆ

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂದು ನೂತನವಾಗಿ ಕಾರ್ಯಾಚರಣೆ ಪ್ರಾರಂಭಿಸಿದ ದಾವಣಗೆರೆಯಿಂದ ಬಾಡ, ಸಂತೆಬೆನ್ನೂರು, ಚನ್ನಗಿರಿ ಹಾಗೂ ಅಜ್ಜಂಪುರ ಮಾರ್ಗವಾಗಿ ಚಿಕ್ಕಮಗಳೂರಿಗೆ ಹೋಗುವ ಬಸ್‍ಗೆ ಕರ್ನಾಟಕ ರಾಜ್ಯ ರಸ್ತೆ ನಿಗಮದ ಅಧ್ಯಕ್ಷರಾದ ಚಂದ್ರಪ್ಪನವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕ.ರಾ.ರ.ಸಾ ನಿಗಮದ ವಿಭಾಗೀಯ ನಿಯಂತ್ರಾಣಾಧಿಕಾರಿ ಸಿದ್ದೇಶ್ವರ ಹೆಬ್ಬಾರ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

Published

on

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.

ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.

ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending