ದಿನದ ಸುದ್ದಿ
ಸಾರಿಗೆ ಮುಷ್ಕರ –ಕಾರ್ಮಿಕರ ಬದುಕು ಘನತೆಯ ಪ್ರಶ್ನೆ
- ನಾ ದಿವಾಕರ
ಯಾವುದೇ ವಲಯದ ದುಡಿಯುವ ಕೈಗಳಿಗೆ ತಮ್ಮ ವೇತನ ಮತ್ತು ಭತ್ಯೆ, ನಿತ್ಯಜೀವನ ಹಾಗೂ ಜೀವನೋಪಾಯವನ್ನು ನಿರ್ಧರಿಸುವ ಸಾಧನಗಳು. ಗಂಟೆಗಳ ಲೆಕ್ಕದಲ್ಲಿ ಕೂಲಿ ಪಡೆಯುವ ದಿನಗೂಲಿ ನೌಕರನಿಂದ ತಿಂಗಳಿಗೆ ಲಕ್ಷಾಂತರ ರೂ ಸಂಬಳ ಗಳಿಸುವ ಸಾಫ್ಟ್ವೇರ್ ಇಂಜಿನಿಯರ್, ಪ್ರೊಫೆಸರ್ ಮತ್ತು ವೈದ್ಯರವರೆಗೂ ದುಡಿಮೆಯ ಹಣವನ್ನು ಹೀಗೆಯೇ ನೋಡಲಾಗುತ್ತದೆ. ಕಾಲಕಾಲಕ್ಕೆ, ಅರ್ಥವ್ಯವಸ್ಥೆಯ ಏರುಪೇರುಗಳೊಂದಿಗೆ, ಮಾರುಕಟ್ಟೆ ವ್ಯತ್ಯಯಗಳೊಂದಿಗೆ ಮತ್ತು ಅವಶ್ಯ ವಸ್ತುಗಳ ಬೆಲೆ ಏರಿಕೆಯೊಂದಿಗೆ ವೇತನ ಮತ್ತು ಭತ್ಯೆಗಳು ಹೆಚ್ಚಾಗದೆ ಹೋದರೆ ದುಡಿಯುವ ಕೈಗಳು ಶಿಥಿಲವಾಗುತ್ತವೆ.
ತಮ್ಮ ಸರಳ ಜೀವನವನ್ನು ತೂಗಿಸಿಕೊಂಡು ಹಿತವಲಯದಲ್ಲಿ ಸುಖ ಕಂಡುಕೊಳ್ಳುವ ಮಟ್ಟಿಗೆ ವೇತನ ಪಡೆಯುವ ಮಧ್ಯಮ ವರ್ಗದ, ಮೇಲ್ ಮಧ್ಯಮ ವರ್ಗದ ವೈಟ್ ಕಾಲರ್ ಎನ್ನಲಾಗುವ ಕಾರ್ಮಿಕರಿಗೆ ಜೀವನದ ನಿತ್ಯ ಬವಣೆ ಹೆಚ್ಚು ಬಾಧಿಸುವುದಿಲ್ಲ. ಬೆಲೆ ಏರಿಕೆಯ ನಡುವೆಯೂ ತಮ್ಮ ಹಿತವಲಯದಲ್ಲೇ ಸಂಭ್ರಮಿಸುವ ಈ ವರ್ಗದ ಕಾರ್ಮಿಕರಿಗೆ ವೇತನ ಹೆಚ್ಚಳ ಎಂದರೆ ಹಿತವಲಯದ ವಿಸ್ತರಣೆಯಷ್ಟೇ ಆಗಿರುತ್ತದೆ. ಈ ವರ್ಗವೇ ಕಳೆದ ಒಂದು ವರ್ಷದಲ್ಲಿ ಸಂಕಷ್ಟಕ್ಕೀಡಾಗಿರುವುದು ಸ್ಪಷ್ಟ.
“ ತೀರಾ ಬಡವರು ಹೇಗೋ ಬದುಕಿಬಿಡುತ್ತಾರೆ, ಶ್ರೀಮಂತರಿಗೆ ಸಮಸ್ಯೆಯೇ ಎದುರಾಗುವುದಿಲ್ಲ, ಮಧ್ಯಮ ವರ್ಗವೇ ಸದಾ ಸಂಕಷ್ಟಕ್ಕೀಡಾಗುವುದು ” ಎನ್ನುವ ಬೀಸು ಹೇಳಿಕೆಗಳ ನಡುವೆಯೇ ಮಧ್ಯಮ ವರ್ಗಗಳು ತಮ್ಮ ಸಂಕಷ್ಟಗಳಿಗೆ ಕಾರಣರಾದವರನ್ನೇ ಅಧಿಕಾರದಲ್ಲಿ ಕೂರಿಸುತ್ತಾ ಸಂಭ್ರಮಿಸುವುದೂ ಹೌದು. ಬ್ಯಾಂಕ್, ವಿಮೆ, ಸಾರ್ವಜನಿಕ ಉದ್ದಿಮೆಗಳ ನೌಕರರು , ಉನ್ನತ ದರ್ಜೆಯ ಸರ್ಕಾರಿ ನೌಕರರು ಮತ್ತು ಆಧುನಿಕ ಸಾಫ್ಟ್ವೇರ್ ನೌಕರರು ಈ ವರ್ಗಕ್ಕೆ ಸೇರುತ್ತಾರೆ.
ಈ ದ್ವಂದ್ವದ ನಡುವೆಯೇ ಬದುಕುವ ಮಧ್ಯಮ ವರ್ಗದ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ಸಂಘಟನಾ ಸಾಮರ್ಥ್ಯ ಮತ್ತು ಐಕಮತ್ಯ ಹೊಂದಿರುವುದೂ ಸತ್ಯ. ಈ ಹಿತವಲಯದ ಹೊಸ್ತಿಲಲ್ಲಿರುವ ಒಂದು ಮಧ್ಯಮ ವರ್ಗವೂ ಕಾರ್ಮಿಕರ ನಡುವೆ ಇರುತ್ತದೆ. ಅಷ್ಟೇನೂ ಹಿತಕರವಲ್ಲದ ಒಂದು ಸರಳ ಬದುಕನ್ನು ತಮ್ಮ ಗಳಿಕೆಯ ಇತಿಮಿತಿಯಲ್ಲೇ ಸಾಗಿಸುತ್ತಾ ನಡೆಯುವ ಈ ಕಾರ್ಮಿಕ ವರ್ಗಗಳನ್ನು ಖಾಸಗಿ ಕಾರ್ಖಾನೆಗಳಲ್ಲಿ, ಸಾರಿಗೆ ಸಂಸ್ಥೆಗಳಲ್ಲಿ, ಸರ್ಕಾರಿ ಕಾರ್ಪೋರೇಷನ್ನುಗಳಲ್ಲಿ ಮತ್ತು ಪುರಸಭೆ, ನಗರ ಸಭೆಗಳಲ್ಲಿ ಕಾಣಬಹುದು.
ಈ ಕಾರ್ಮಿಕ ವರ್ಗಗಳ ಸಂಘಟನಾ ಸಾಮರ್ಥ್ಯ ಎಷ್ಟೇ ಇದ್ದರೂ ಹೆಚ್ಚಿನ ಸಂದರ್ಭದಲ್ಲಿ ವಿಘಟಿತವಾಗಿರುತ್ತದೆ. ತಮ್ಮ ಸೇವಾ ವಲಯದ ಸಂಸ್ಥೆಗಳ ಆರ್ಥಿಕ ಸ್ಥಿತ್ಯಂತರಗಳು ತಮ್ಮ ವೇತನ ಭತ್ಯೆಗಳನ್ನೂ ನಿರ್ಧರಿಸುತ್ತವೆ ಎನ್ನುವ ಪರಿವೆ ಈ ಕಾರ್ಮಿಕರಲ್ಲಿ ಇರುತ್ತದೆ. ತಮ್ಮ ಹೆಚ್ಚಿನ ದುಡಿಮೆಗಾಗಿ ಉತ್ಪಾದನೆಯನ್ನು ಹೆಚ್ಚಿಸಬೇಕಾದ ಅನಿವಾರ್ಯತೆಯನ್ನೂ ಕಾರ್ಖಾನೆಗಳಲ್ಲಿ ಕಾಣುತ್ತೇವೆ. ಇಲ್ಲಿ ಹೆಚ್ಚುವರಿ ಉತ್ಪಾದನೆ ಮತ್ತು ಲಾಭಾಂಶ ಬಂಡವಾಳಿಗನ, ಅಂದರೆ ಸಂಸ್ಥೆಯ ಮಾಲಿಕರ, ಪಾಲಾದರೆ ಅಲ್ಪಾಂಶವನ್ನು ವೇತನ-ಭತ್ಯೆಯ ರೂಪದಲ್ಲಿ ನೀಡಲಾಗುತ್ತದೆ.
ಈ ಎರಡನೆಯ ವರ್ಗಕ್ಕೆ ಸೇರಿದ ಒಂದು ಕಾರ್ಮಿಕ ವರ್ಗ ಸಾರಿಗೆ ಸಂಸ್ಥೆಯ ನೌಕರರು. ಇವರು ಪೂರ್ಣ ಪ್ರಮಾಣದ ಸರ್ಕಾರಿ ನೌಕರರಲ್ಲ ಆದರೆ ಒಂದು ಸುಭದ್ರ ನೌಕರಿ ಮತ್ತು ನಿಗದಿತ ವೇತನವನ್ನು ಪಡೆಯುವ ಕಾರ್ಮಿಕರು. ಸಾರಿಗೆ ಸಂಸ್ಥೆಯ ಲಾಭ ನಷ್ಟಗಳು ಮತ್ತು ನಿತ್ಯ ಆದಾಯ ಇವರ ವೇತನ-ಭತ್ಯೆಗಳನ್ನೂ ನಿರ್ಧರಿಸುತ್ತದೆ.
ಕರ್ನಾಟಕ ರಾಜ್ಯ ರಸ್ಥೆ ಸಾರಿಗೆ ಸಂಸ್ಥೆ ಒಂದು 1,30,000ಕ್ಕೂ ಹೆಚ್ಚು ಕಾರ್ಮಿಕರಿಗೆ ಅನ್ನ ನೀಡುವ ಒಂದು ಬೃಹತ್ ಉದ್ದಿಮೆ. ರಾಷ್ಟ್ರೀಕರಣದ ನಂತರದಲ್ಲಿ ಈ ಸಂಸ್ಥೆ ಇಂದು ವಿಭಾಗೀಯ ಮಟ್ಟದಲ್ಲಿ ಬೆಳೆದಿದ್ದು ಪ್ರತ್ಯೇಕ ಪ್ರಾಂತೀಯ ವಿಭಾಗಗಳಾಗಿ , ನಾಲ್ಕು ಸಾರಿಗೆ ಸಂಸ್ಥೆಗಳಾಗಿ, ಕಾರ್ಯ ನಿರ್ವಹಿಸುತ್ತಿದೆ. ಸರ್ಕಾರದ ಕೃಪೆಯಿಂದಲೇ ನಡೆಯಬೇಕಾದ ಈ ಸಂಸ್ಥೆಯ ಹಣಕಾಸು ಸ್ಥಿತಿಯನ್ನು ಸಂರಕ್ಷಿಸುವ ಹೊಣೆ ಸರ್ಕಾರದ ಮೇಲಿದ್ದಷ್ಟೇ ಅಲ್ಲಿನ ಕಾರ್ಮಿಕರ ಮೇಲೆಯೂ ಇರುತ್ತದೆ.
ಈ ಸಂಸ್ಥೆಯ ನೌಕರರು ಈಗ ತಮ್ಮ ವೇತನ ಪರಿಷ್ಕರಣೆ, ಸೇವಾ ನಿಯಮಗಳ ಸುಧಾರಣೆಗಾಗಿ ಮುಷ್ಕರ ಹೂಡಿದ್ದಾರೆ. ಎರಡು ತಿಂಗಳ ಹಿಂದೆ ಹಠಾತ್ ಮುಷ್ಕರದ ಮೂಲಕ ತಮ್ಮ ಸಮಸ್ಯೆಗಳನ್ನು ಮುನ್ನೆಲೆಗೆ ತಂದ ಸಾರಿಗೆ ನೌಕರರು ತಮ್ಮನ್ನು ಸರ್ಕಾರಿ ನೌಕರರಂತೆ ಪರಿಗಣಿಸುವ ಪ್ರಮುಖ ಬೇಡಿಕೆಯೊಂದಿಗೆ ಉಪವಾಸ ಸತ್ಯಾಗ್ರಹವನ್ನೂ ಕೈಗೊಂಡಿದ್ದರು.
ಸರ್ಕಾರ ಇವರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ನಂತರ ಮುಷ್ಕರ ಅಂತ್ಯವಾಗಿತ್ತು. ಈಗ ಮತ್ತೊಮ್ಮೆ ಮುಷ್ಕರ ಹೂಡಿರುವ ಸಾರಿಗೆ ನೌಕರರು ಆರನೆಯ ವೇತನ ಆಯೋಗದ ಅನ್ವಯ ತಮಗೂ ವೇತನ ಪರಿಷ್ಕರಣೆ ಮಾಡುವ ಒತ್ತಾಯವನ್ನು ಸರ್ಕಾರದ ಮುಂದಿರಿಸಿದ್ದಾರೆ. ಇದು ಪ್ರಸ್ತುತ ಬಿಕ್ಕಟ್ಟನ್ನು ಮತ್ತಷ್ಟು ಜಟಿಲಗೊಳಿಸಿದೆ.
ಸಾರಿಗೆ ಸಂಸ್ಥೆಯ ರಾಷ್ಟ್ರೀಕರಣವಾದ ದಿನದಿಂದಲೂ ಅಲ್ಲಿನ ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡುತ್ತಾ, ಅನೇಕ ಏಳು ಬೀಳುಗಳ ನಡುವೆಯೂ ಉತ್ತಮ ವೇತನ ಶ್ರೇಣಿಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸಾರಿಗೆ ನೌಕರರ ಸಂಘಟನೆ (ಎಐಟಿಯುಸಿ ಸಂಯೋಜಿತ ಫೆಡರೇಷನ್) ಯಶಸ್ವಿಯಾಗಿದೆ. ನಿಗದಿತ ಅವಧಿಯಲ್ಲಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುವ ಒಂದು ಶಿಸ್ತನ್ನೂ ಅಳವಡಿಸಲಾಗಿತ್ತು.
ರಾಜ್ಯ ಸಾರಿಗೆ ಮತ್ತು ಬೆಂಗಳೂರು ನಗರ ಸಾರಿಗೆ ಸಂಸ್ಥೆಗಳ ಚಾಲಕರು, ನಿರ್ವಾಹಕರು, ಮೆಕಾನಿಕ್ಗಳು ಮತ್ತು ಡಿಪೋಗಳಲ್ಲಿ ಕೆಲಸ ಮಾಡುವ ಅಸಂಖ್ಯಾತ ಕಾರ್ಮಿಕರಿಗೆ ಉತ್ತಮ ಭವಿಷ್ಯ ನಿಧಿ, ಗ್ರಾಚ್ಯುಯಿಟಿ ಮತ್ತು ಇತರ ನಿವೃತ್ತಿ ಸೌಲಭ್ಯಗಳನ್ನು ಒದಗಿಸುವಲ್ಲಿ ಫೆಡರೇಷನ್ ಮಹತ್ವದ ಪಾತ್ರ ವಹಿಸಿದೆ.
ಆದರೆ ಎಲ್ಲ ಕ್ಷೇತ್ರಗಳಲ್ಲಿ, ವಲಯಗಳಲ್ಲಿ ಆದಂತೆಯೇ ಸಾರಿಗೆ ವಲಯದಲ್ಲೂ 2000ದ ನಂತರದ ಅವಧಿಯಲ್ಲಿ ಆಡಳಿತ ನೀತಿ ಬದಲಾವಣೆಯಾಗುತ್ತಲೇ ಬಂದಿದೆ. ದುಡಿಮೆಗಾರರ ಬೇಡಿಕೆಗಳನ್ನು ನಿರ್ಲಕ್ಷಿಸುವುದು ಅಥವಾ ಕಾರ್ಮಿಕರ ಹಿತಾಸಕ್ತಿಗಳನ್ನು ನಿರ್ಲಕ್ಷಿಸುತ್ತಲೇ ಸಂಸ್ಥೆಯನ್ನೂ ಶಿಥಿಲಗೊಳಿಸಿ ಕ್ರಮೇಣ ಖಾಸಗೀಕರಣದತ್ತ ತೆವಳುತ್ತಾ ಸಾಗುವ ಒಂದು ವಿಕೃತ ನೀತಿಯನ್ನು ಅನುಸರಿಸುತ್ತಾ ಬರಲಾಗಿದೆ.
ಇದು ದೇಶದ ಸಮಸ್ತ ಸಾರ್ವಜನಿಕ ಉದ್ದಿಮೆಗಳಲ್ಲಿ, ಬ್ಯಾಂಕಿಂಗ್ ಮತ್ತು ವಿಮೆ ಸೇರಿದಂತೆ, ಅನುಸರಿಸುತ್ತಾ ಬರಲಾಗಿರುವ ಒಂದು ವಿಕೃತ ನೀತಿ. ಈ ನೀತಿಯ ಜನಕ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ. ಇಂದು ದೇಶದ ಒಂದೊಂದೇ ಸಾರ್ವಜನಿಕ ಉದ್ದಿಮೆಗಳು ಖಾಸಗಿ ಪಾಲಾಗುತ್ತಿದ್ದರೆ ಈ ಸರಪಳಿಯ ಕೊಂಡಿಗಳನ್ನು ಶಿಥಿಲಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ್ದು ವಾಜಪೇಯಿ ಆಡಳಿತಾವಧಿಯಲ್ಲಿ ಎನ್ನುವುದನ್ನು ಗಮನದಲ್ಲಿಡಬೇಕು.
ಕರ್ನಾಟಕ ಸಾರಿಗೆ ಸಂಸ್ಥೆಯ ನೌಕರರೂ ಸಹ 2004ರಿಂದಲೂ ವೇತನ ಪರಿಷ್ಕರಣೆಗಾಗಿ ಹೋರಾಡುತ್ತಲೇ ಬಂದಿದ್ದಾರೆ. 1995ಕ್ಕೂ ಮುಂಚೆ ಇದ್ದಂತೆ ನಿರ್ದಿಷ್ಟ ಅವಧಿಯಲ್ಲಿ ವೇತನ ಪರಿಷ್ಕರಣೆಯನ್ನು ತ್ರಿಪಕ್ಷೀಯ ಮಾತುಕತೆಗಳ ಮೂಲಕ ಬಗೆಹರಿಸಿದ್ದರೆ ಇಂದು ಸಮಸ್ಯೆ ಉಲ್ಬಣಿಸುತ್ತಿರಲಿಲ್ಲ. ರಾಜ್ಯ ಕೈಗಾರಿಕಾ ನ್ಯಾಯಾಧೀಕರಣದ ಅದೇಶದ ಅನ್ವಯ ಈಗಲೂ ಸಾರಿಗೆ ಸಂಸ್ಥೆ ನೌಕರರಿಗೆ 2004ರ ಜನವರಿ 1ರಿಂದ ಶೇ 20ರಷ್ಟು ವೇತನ ಹೆಚ್ಚಳ ನೀಡಬೇಕಿದೆ.
ಆದರೆ ಈ ಆದೇಶದ ವಿರುದ್ಧ ಸಂಸ್ಥೆ ನ್ಯಾಯಾಲಯದ ಮೆಟ್ಟಿಲೇರಿದೆ. ಅಷ್ಟೇ ಅಲ್ಲದೆ ಅವಶ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ)ಎಂಬ ಪೆಡಂಭೂತವನ್ನು ಕಾರ್ಮಿಕರ ಮುಂದಿರಿಸುವ ಮೂಲಕ ವೇತನ ಹೆಚ್ಚಳ ಮತ್ತು ನೌಕರಿಯ ರಕ್ಷಣೆ ಈ ಎರಡೂ ಜೀವನೋಪಾಯದ ಮಾರ್ಗಗಳನ್ನೇ ಮುಖಾಮುಖಿಯಾಗಿರಿಸುತ್ತಾ ಕಾರ್ಮಿಕರ ವೇತನ ಪರಿಷ್ಕರಣೆಯನ್ನು ಮುಂದೂಡುತ್ತಾ ಬರಲಾಗಿದೆ.
ಸದ್ಯಕ್ಕೆ ಇದು ನ್ಯಾಯಾಲಯದ ಕಟಕಟೆಯಲ್ಲಿದ್ದು ಒಂದು ವೇಳೆ ಕಾರ್ಮಿಕ ನ್ಯಾಯಾಲಯದಲ್ಲಿ ತೀರ್ಪು ಕಾರ್ಮಿಕರ ಪರ ಬಂದರೆ, ಸಾರಿಗೆ ನೌಕರರಿಗೆ 2004ರ ಜನವರಿ 1ರಿಂದ ವೇತನ ಹೆಚ್ಚಳ ದೊರೆಯುತ್ತದೆ. ಕನಿಷ್ಟ ಶೇ 20ರಷ್ಟು ಹೆಚ್ಚಳ ನೀಡುವ ಬೇಡಿಕೆಯನ್ನೂ ಫೆಡರೇಷನ್ ಆಡಳಿತ ಮಂಡಲಿಯ ಮುಂದೆ ಇರಿಸಿದೆ.
ಇಂದು ನಡೆಯುತ್ತಿರುವ ಮುಷ್ಕರದ ಮೂಲ ಬೇಡಿಕೆ ಸಾರಿಗೆ ನೌಕರರಿಗೆ ಆರನೆಯ ವೇತನ ಆಯೋಗದ ವೇತನಶ್ರೇಣಿಯನ್ನು ಅನ್ವಯಿಸಬೇಕು ಎಂಬುದಾಗಿದೆ. ಎರಡು ತಿಂಗಳ ಹಿಂದೆ ನಡೆದ ಮುಷ್ಕರದಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂಬ ಬೇಡಿಕೆ ಪ್ರಧಾನವಾಗಿತ್ತು. ಇಂದು ಈ ಬೇಡಿಕೆ ಹಿಂಬದಿಗೆ ಸರಿದಿದೆ.
ಆರನೆ ವೇತನ ಆಯೋಗದ ವೇತನ ಶ್ರೇಣಿಯನ್ನು ಅನ್ವಯಿಸಬೇಕಾದರೆ ಸಂಸ್ಥೆಗೆ ನಾಲ್ಕು ಸಾವಿರ ಕೋಟಿ ರೂಗಳಷ್ಟು ಹೊರೆಯಾಗುತ್ತದೆ ಎಂದು ಫೆಡರೇಷನ್ ನಾಯಕರು ಹೇಳುತ್ತಾರೆ. ಈಗಾಗಲೇ ಸಾರಿಗೆ ಸಂಸ್ಥೆಗಳು 3750 ಕೋಟಿ ರೂಗಳಷ್ಟು ನಷ್ಟ ಅನುಭವಿಸುತ್ತಿದ್ದು ಕಳೆದ ವರ್ಷದ ಕೊರೋನಾ ಲಾಕ್ ಡೌನ್ ಪರಿಣಾಮ ಇನ್ನೂ ನಾಲ್ಕು ಸಾವಿರ ಕೋಟಿ ರೂ ಹೆಚ್ಚಿನ ನಷ್ಟ ಅನುಭವಿಸಿದೆ.
ಈ ಸನ್ನಿವೇಶದಲ್ಲಿ ಸಾರಿಗೆ ಸಂಸ್ಥೆಗೆ ಜೀವ ತುಂಬುವ ನೈತಿಕ ಹೊಣೆಗಾರಿಕೆ ಸರ್ಕಾರದ ಮೇಲಿರುತ್ತದೆ. ಆದರೆ ಕಳೆದ ಇಪ್ಪತ್ತು ವರ್ಷಗಳಲ್ಲಿ ಯಾವುದೇ ಸರ್ಕಾರವೂ ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಸಾರಿಗೆ ಸಂಸ್ಥೆಗಳು ಸರ್ಕಾರಕ್ಕೆ ಅತಿಹೆಚ್ಚಿನ ತೆರಿಗೆ ಪಾವತಿಸುತ್ತವೆ. ಇತ್ತೀಚೆಗಷ್ಟೇ ಬೆಂಗಳೂರು ನಗರ ಸಾರಿಗೆ ಸಂಸ್ಥೆಗೆ ಮೋಟಾರು ವಾಹನ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.
ರಾಜ್ಯ ಸರ್ಕಾರ ತನ್ನ ವಾರ್ಷಿಕ ಆಯವ್ಯಯದಲ್ಲಿ ರಾಜ್ಯ ಸಾರಿಗೆ ಸಂಸ್ಥೆಗಳ ನಿರ್ವಹಣೆಗೆ ಕನಿಷ್ಟ 1000 ಕೋಟಿ ರೂ ಮೀಸಲಿಡುವ ಕಾರ್ಮಿಕ ಸಂಘಟನೆಯ ಬೇಡಿಕೆಗೆ ಈವರೆಗೂ ಮನ್ನಣೆ ನೀಡದಿರುವುದು ಸರ್ಕಾರದ ನಿಷ್ಕ್ರಿಯತೆ ಮತ್ತು ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.
ಈ ಮುಷ್ಕರದ ಹಿನ್ನೆಲೆಯಲ್ಲಿ ನೋಡಿದಾಗ ಸಾರಿಗೆ ನೌಕರರ ಬೇಡಿಕೆಗಳು ನ್ಯಾಯಯುತವಾಗಿವೆ. ಆದರೆ ಆರನೆ ವೇತನ ಆಯೋಗದ ವೇತನಶ್ರೇಣಿಗಾಗಿ ಪಟ್ಟುಹಿಡಿಯುವುದು ಇಂದಿನ ಪರಿಸ್ಥಿತಿಯಲ್ಲಿ ಅತ್ಯವಶ್ಯವೇನೂ ಅಲ್ಲ. ಹತ್ತು ವರ್ಷಕ್ಕೊಮ್ಮೆ ಪರಿಷ್ಕರಣೆಯಾಗುವ ವೇತನ ಆಯೋಗಕ್ಕಿಂತಲೂ ನಾಲ್ಕು ವರ್ಷಕ್ಕೊಮ್ಮೆ ಪರಿಷ್ಕರಿಸಲಾಗುವ ಉದ್ಯಮದ ಆಂತರಿಕ ಒಪ್ಪಂದಕ್ಕೆ ಸಾರಿಗೆ ಸಂಸ್ಥೆ ಮತ್ತು ಸರ್ಕಾರ ಮನ್ನಣೆ ನೀಡಿದರೂ ಸಾರಿಗೆ ನೌಕರರಿಗೆ ಸಾಕಷ್ಟು ವೇತನ ಹೆಚ್ಚಳ ಲಭ್ಯವಾಗುತ್ತದೆ.
ಬಸ್ ಚಾಲಕರು ಮತ್ತು ನಿರ್ವಾಹಕರ ಸೇವಾ ದಕ್ಷತೆ ಮತ್ತು ಉತ್ತಮ ನಿರ್ವಹಣೆಯ ಪರಿಣಾಮವಾಗಿಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಲವು ಬಾರಿ ವಿಶ್ವ ಮಾನ್ಯತೆ ಪಡೆದಿದೆ. ಸಾರ್ವಜನಿಕ ವಲಯದಲ್ಲೂ ಸಹ ಸಾರಿಗೆ ಸಂಸ್ಥೆಯ ಬಸ್ಸುಗಳೇ ಹೆಚ್ಚು ಸುರಕ್ಷಿತ ಎನ್ನುವ ಭಾವನೆ ಮೂಡಿದ್ದರೆ ಅದಕ್ಕೆ ಸಾರಿಗೆ ನೌಕರರ ದಕ್ಷತೆ ಮತ್ತು ಬದ್ಧತೆಯೇ ಕಾರಣವಲ್ಲವೇ ?
ಸಂಸ್ಥೆ ನಷ್ಟ ಅನುಭವಿಸುತ್ತಿದ್ದರೆ ಅದಕ್ಕೆ ಇತರ ಹಲವು ಕಾರಣಗಳಿವೆ. ಕೆಳಹಂತದ ಚಾಲಕರು, ನಿರ್ವಾಹಕರು, ಮೆಕಾನಿಕ್ಗಳು ಮತ್ತಿತರ ಕಾರ್ಮಿಕರು ಈ ನಷ್ಟಕ್ಕೆ ಹೊಣೆಗಾರರಾಗುವುದಿಲ್ಲ. ಭ್ರಷ್ಟಾಚಾರದ ಸೋಂಕಿನಿಂದ ಸಾರಿಗೆ ನೌಕರರು ಸಂಪೂರ್ಣ ಮುಕ್ತರಾಗಿಲ್ಲ ಎನ್ನುವುದೂ ಅಷ್ಟೇ ಸತ್ಯ. ಆದರೆ ಸಂಸ್ಥೆಯ ನಷ್ಟಕ್ಕೆ ಮೇಲಧಿಕಾರಿಗಳ ಭ್ರಷ್ಟಾಚಾರವೂ ಅಷ್ಟೇ ಕಾರಣ ಎನ್ನುವುದನ್ನೂ ಅಲ್ಲಗಳೆಯಲಾಗುವುದಿಲ್ಲ.
ಕೋವಿದ್ ಸಂದರ್ಭದಲ್ಲಿ ತಮ್ಮ ಜೀವ ಒತ್ತೆ ಇಟ್ಟು ಕಾರ್ಯನಿರ್ವಹಿಸಿದ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಮಾನ್ಯ ಮಾಡಿ ಈಡೇರಿಸುವುದು ಒಂದು ಜವಾಬ್ದಾರಿಯುತ ಸರ್ಕಾರದ ನೈತಿಕ ಜವಾಬ್ದಾರಿಯೂ ಆಗಿರುತ್ತದೆ. ಕೋವಿದ್ ಸಂದರ್ಭದಲ್ಲಿ ಮಡಿದ ಸಿಬ್ಬಂದಿಗೆ ಪರಿಹಾರ ನಿಧಿಯನ್ನೂ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕಿದೆ.
ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸಾರಿಗೆ ನೌಕರರು ಧರಣಿ, ಮುಷ್ಕರ, ಕಾನೂನು ಹೋರಾಟಗಳನ್ನು ನಡೆಸುತ್ತಲೇ ಬಂದಿದ್ದಾರೆ. ಈಗ ಹೋರಾಟದ ರಂಗ ಪ್ರವೇಶಿಸಿರುವ ರೈತ ನಾಯಕರು ಒಂದು ಕಾರ್ಮಿಕ ವರ್ಗವನ್ನು ಮುನ್ನಡೆಸುವಾಗ ಅನುಸರಿಸಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಕೊಂಚ ಯೋಚಿಸುವುದು ಒಳಿತು. ಸಂಸ್ಥೆಯ ಉಳಿವು ಮತ್ತು ಕಾರ್ಮಿಕರ ಹಿತಾಸಕ್ತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಹೋರಾಟಗಳನ್ನು ರೂಪಿಸುವುದು ಇಂದಿನ ತುರ್ತು.
ಏಕೆಂದರೆ ಸಾರಿಗೆ ವಲಯವನ್ನು ಖಾಸಗೀಕರಿಸಲು ಸರ್ಕಾರ ತುದಿಗಾಲಲ್ಲಿ ನಿಂತಿದೆ. ಎಸ್ಮಾ ಕಾಯ್ದೆ ಜಾರಿಗೊಳಿಸಿದರೆ ನೂರಾರು ಕಾರ್ಮಿಕರು ತೊಂದರೆಗೊಳಗಾಗುತ್ತಾರೆ, ನೌಕರಿ ಕಳೆದುಕೊಳ್ಳಬೇಕಾಗುತ್ತದೆ. ಇವರನ್ನು ಕಾನೂನು ಹೋರಾಟಗಳ ಮೂಲಕ ರಕ್ಷಿಸುವ ಪರಿಕರಗಳನ್ನು ನೂತನ ಸಂಘಟನೆ ಹೊಂದಿದೆಯೇ ಎಂಬ ಗಹನವಾದ ಪ್ರಶ್ನೆಯೂ ಕಾಡುತ್ತದೆ.
ನೋಂದಾಯಿತ ಸಂಘಟನೆಯಾದ ಮಾತ್ರಕ್ಕೆ ಸಂಸ್ಥೆಯಲ್ಲಿ ಯಾವುದೇ ಆಂತರಿಕ ಚುನಾವಣೆಯನ್ನು ಎದುರಿಸದೆ, ಕಾರ್ಮಿಕರಿಂದ ಪ್ರಜಾಸತ್ತಾತ್ಮಕ ಚುನಾವಣೆಗಳ ಮೂಲಕ ಚುನಾಯಿತರಾಗದೆ, ಸಂಸ್ಥೆಯ ಮಾನ್ಯತೆ ಪಡೆಯದಿರುವ ಒಂದು ಸಂಘಟನೆ ಹಠಾತ್ತನೆ ತಾನು ಸಮಸ್ತ ಸಾರಿಗೆ ಕಾರ್ಮಿಕರ ಹಿತಾಸಕ್ತಿಯನ್ನು ರಕ್ಷಿಸುವುದಾಗಿ ಮುಂದಾಗುವುದು ಆತ್ಮಹತ್ಯಾ ಪ್ರವೃತ್ತಿಯಾಗಿಯೂ ಪರಿಣಮಿಸಬಹುದು.
ಎಐಟಿಯುಸಿ ಆಗಲೀ, ಸಿಐಟಿಯು ಆಗಲಿ, ಎಡಪಕ್ಷಗಳೇ ಆಗಲಿ ಅಥವಾ ಫೆಡರೇಷನ್ ಆಗಲೀ ಕಾರ್ಮಿಕ ಹೋರಾಟವನ್ನು ಮುನ್ನಡೆಸುವ ಜೀವಿತಕಾಲದ ಗುತ್ತಿಗೆಯನ್ನೇನೂ ಪಡೆದಿಲ್ಲ, ಹಾಗೆಂದು ಪ್ರತಿಪಾದಿಸುವುದೂ ಇಲ್ಲ. ಆದರೆ ಒಂದು ಹೋರಾಟ ರೂಪಿಸುವ ಮುನ್ನ ಸಾಧಕ ಬಾಧಕಗಳನ್ನು ಪರಾಮರ್ಶಿಸಿ ಕಾರ್ಮಿಕರ ಭವಿಷ್ಯದ ಹಾದಿಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಯೋಚಿಸುವುದು ಯಾವುದೇ ಕಾರ್ಮಿಕ ಸಂಘಟನೆಯ ನೈತಿಕ ಜವಾಬ್ದಾರಿ.
ಲಾಭದಾಯಕವಾಗಿದ್ದ ಸಾರಿಗೆ ಸಂಸ್ಥೆಯನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿ 1995ರಿಂದಲೂ ಸರ್ಕಾರಗಳು ಸಾರಿಗೆ ಸಂಸ್ಥೆಯ ಮೇಲೆ ಸವಾರಿ ಮಾಡುತ್ತಾ ಖಾಸಗಿ ಬಸ್ ಮಾರ್ಗಗಳಿಗೆ ಅನುಕೂಲ ಮಾಡಿಕೊಡುತ್ತಿವೆ. ದೀರ್ಘಪ್ರಯಾಣದ ಲಾಭದಾಯಕ ಮಾರ್ಗಗಳಲ್ಲಿ ಖಾಸಗಿ ಬಸ್ಸುಗಳಿಗೆ ಅವಕಾಶ ಮಾಡಿಕೊಟ್ಟಿರುವುದೇ ಅಲ್ಲದೆ ಸಾರಿಗೆ ಬಸ್ಸುಗಳಿಗೆ ಡೀಸೆಲ್ ದರದಲ್ಲೂ ರಿಯಾಯಿತಿ ನೀಡದೆ ಸಂಸ್ಥೆ ಸೊರಗಿಹೋಗುವಂತೆ ಮಾಡುತ್ತಿವೆ.
ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಇತರ ನೌಕರ ವರ್ಗಗಳಿಗೆ ರಿಯಾಯಿತಿ ದರದಲ್ಲಿ ನೀಡುವ ಬಸ್ ಪಾಸ್ಗಳಿಂದ ರಾಜ್ಯದ ಕೋಟ್ಯಂತರ ಜನತೆ ಅನುಕೂಲ ಪಡೆಯುತ್ತಿದ್ದಾರೆ. ಈ ಹೊರೆಯನ್ನು ಸಂಸ್ಥೆಯೇ ಹೊರುತ್ತಿದೆಯೇ ಹೊರತು, ಸರ್ಕಾರ ಭರಿಸುತ್ತಿಲ್ಲ. ಇದು ಹೊಣೆಗೇಡಿತನವಲ್ಲವೇ ? ಇವೆಲ್ಲದರ ಪರಿವೆ ನೂತನ ರೈತ ಕಾರ್ಮಿಕ ನಾಯಕರಿಗೆ ಇರಬೇಕಾಗುತ್ತದೆ.
ಖಾಸಗೀಕರಣದ ಕತ್ತಿ ಸದಾ ತಲೆಯ ಮೇಲೆ ತೂಗಾಡುತ್ತಿರುವ ಸನ್ನಿವೇಶದಲ್ಲೇ ನಷ್ಟದಲ್ಲಿ ನಡೆಯುತ್ತಿರುವ ಸಾರಿಗೆ ಸಂಸ್ಥೆಯ ಕಾರ್ಮಿಕರಲ್ಲಿ ಈ ಜಾಗೃತಿ ಮೂಡಿಸುವುದೂ ಮುಖ್ಯ. ಈ ಮುಷ್ಕರದ ಪರಿಣಾಮ ಈಗಾಗಲೇ, ಸಾರಿಗೆ ಸಂಸ್ಥೆಯ ನಿಲ್ದಾಣದ ಆಸುಪಾಸಿನಲ್ಲೂ ಸುಳಿಯದಿದ್ದ ಖಾಸಗಿ ಬಸ್ಸುಗಳು ಈಗ ನಿಲ್ದಾಣಗಳನ್ನು ಪ್ರವೇಶಿಸಿವೆ.
ಮುಷ್ಕರದ ಪರಿಣಾಮ ಜನಸಾಮಾನ್ಯರ ಬವಣೆ ಹೆಚ್ಚಾಗಿದೆ ಎಂಬ ಒಂದೇ ಕಾರಣಕ್ಕೆ ಸರ್ಕಾರ ಖಾಸಗೀಕರಣಕ್ಕೆ ಮುಂದಾಗುವುದನ್ನೂ ಇಂದಿನ ಸಂದರ್ಭದಲ್ಲಿ ಅಲ್ಲಗಳೆಯಲಾಗುವುದಿಲ್ಲ. ಮುಷ್ಕರನಿರತ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿರುವ ಸಚಿವ ಆರ್ ಅಶೋಕ್ ವಾಯುವ್ಯ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳು ಮುಳುಗಿರುವ ಹಡಗುಗಳು ಎಂದು ಹೇಳಿರುವುದು ವರದಿಯಾಗಿದೆ. ಇದಕ್ಕೆ ಕಾರಣ ಸರ್ಕಾರವೇ ಅಲ್ಲವೇ ?
ಇವು ಮುಳುಗಿಸಲಾಗಿರುವ ಹಡಗುಗಳು ಎಂದು ಇತಿಹಾಸ ಸಾರಿ ಹೇಳುತ್ತದೆ. ಈಗ ತೇಲುತ್ತಿರುವ ನೌಕೆಯನ್ನೂ ಸಂಪೂರ್ಣವಾಗಿ ಮುಳುಗಿಸಿ ಮತ್ತೊಬ್ಬ ಕಾರ್ಪೋರೇಟ್ ಉದ್ಯಮಿಗೆ ಪರಭಾರೆ ಮಾಡಲು ಸರ್ಕಾರ ತುದಿಗಾಲಲ್ಲಿ ನಿಂತಿರುವುದು ಸತ್ಯ. “ ವ್ಯಾಪಾರ ವ್ಯವಹಾರ ಸರ್ಕಾರದ ಕೆಲಸ ಅಲ್ಲ ” ಎಂದು ಪ್ರಧಾನಿ ಮೋದಿಯವರು ಹೇಳಿರುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಈಗ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳನ್ನು ಮಾರಾಟ ಮಾಡುವ ಪ್ರಕ್ರಿಯೆ ವ್ಯಾಪಾರ ವ್ಯವಹಾರದ ಚೌಕಟ್ಟಿಗೆ ಒಳಪಡುವುದಿಲ್ಲ ಎಂದು ನಾವೂ ನಂಬಬೇಕಿದೆ.
ಈ ಸಂದರ್ಭದಲ್ಲೇ ಸಾರಿಗೆ ನೌಕರರು ಮುಷ್ಕರ ಹೂಡಿದ್ದಾರೆ. ಈ ಶ್ರಮಜೀವಿಗಳ ಮುಖ್ಯ ಬೇಡಿಕೆಗಳನ್ನು, ವೇತನ ಪರಿಷ್ಕರಣೆಯನ್ನೂ ಸೇರಿದಂತೆ, ಕೂಡಲೇ ಈಡೇರಿಸಿ, ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳುವುದು ಸರ್ಕಾರದ ಮತ್ತು ಮುಷ್ಕರ ನಿರತ ಕಾರ್ಮಿಕ ಸಂಘಟನೆಗಳ ಆದ್ಯತೆಯಾಗಬೇಕಿದೆ.
ಸಂಕಷ್ಟದಲ್ಲಿರುವ ಕಾರ್ಮಿಕರ ಬದುಕನ್ನು ಹಸನಾಗಿಸಿದರೆ ಕಡಲ ತಳದಲ್ಲಿರುವ ಹಡಗನ್ನೂ ಮೇಲೆ ತರುವ ಶಕ್ತಿ ಸಾಮರ್ಥ್ಯ ಅವರಲ್ಲಿ ಮೂಡುತ್ತದೆ. ಇದು ಸಾರಿಗೆ ಕಾರ್ಮಿಕರ ಬದುಕಿನ ಪ್ರಶ್ನೆ ಮತ್ತು ಘನತೆಯ ಪ್ರಶ್ನೆ. ಸರ್ಕಾರಕ್ಕೆ ಈ ಪರಿಜ್ಞಾನ ಇದ್ದರೆ ಸಮಸ್ಯೆ ಸುಲಭವಾಗಿ ಪರಿಹರಿಸಬಹುದು.
ಕೊನೆಯದಾಗಿ ಒಂದು ಅಂಶವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ನಾಲ್ಕೂವರೆ ದಶಕಗಳ ಕಾಲ ಸತತ ಹೋರಾಟಗಳ ಮೂಲಕ ರಾಜ್ಯವ್ಯಾಪಿ ಸಂಚರಿಸಿ, ಹಲವಾರು ರೀತಿಯ ತ್ಯಾಗ ಬಲಿದಾನಗಳ ಮೂಲಕ ಕಟ್ಟಿ ಬೆಳೆಸಿದ ಒಂದು ಕಾರ್ಮಿಕ ಸಂಘಟನೆಯ ಸದಸ್ಯರು ಇಂದು ರಾತ್ರೋರಾತ್ರಿ ಉಗಮಿಸಿದ ಒಂದು ಹೊಸ ಸಂಘಟನೆಯ ಹಿಂದೆ ಒತ್ತಾಸೆಯಾಗಿ ನಿಂತಿರುವುದು ಯೋಚಿಸಬೇಕಾದ ವಿಚಾರ.
ಕಾರ್ಮಿಕ ಹೋರಾಟದ ಅಥವಾ ಸಂಘಟನೆಯ ಹೆಜ್ಜೆ ಗುರುತುಗಳನ್ನೇ ಕಾಣದ ಒಂದು ಹೊಸ ಸಂಘಟನೆ ಮತ್ತು ನಾಯಕತ್ವ ಹೇಗೆ ಇಷ್ಟು ದೊಡ್ಡ ಸಂಘಟನೆಯ ಕಾರ್ಮಿಕರನ್ನು ಸೆಳೆಯಲು ಸಾಧ್ಯ ಎನ್ನುವ ಪ್ರಶ್ನೆಯೂ ನಮ್ಮನ್ನು ಕಾಡಬೇಕಿದೆ. ಇದು ಕಾರ್ಮಿಕರ ಐಕ್ಯತೆ ಮತ್ತು ಐಕಮತ್ಯವನ್ನು ಭಂಗಗೊಳಿಸುವ ಹುನ್ನಾರ ಎಂದರೂ ತಪ್ಪಾಗುವುದಿಲ್ಲ. ಕಾರ್ಮಿಕರಲ್ಲಿನ ಹತಾಶೆ, ಅನಿವಾರ್ಯತೆ, ಅಸಹಾಯಕತೆ ಮತ್ತು ಕಾರ್ಯಸಾಧನೆಯ ಹಪಹಪಿ ಇವೆಲ್ಲವನ್ನೂ ಮೀರಿದ ಒಂದು ಆಯಾಮವನ್ನೂ ಈ ಬೆಳವಣಿಗೆಯಲ್ಲಿ ಕಾಣುವುದಾದರೆ ಆತ್ಮಾವಲೋಕನಕ್ಕೆ ಅವಕಾಶ ಇರಲು ಸಾಧ್ಯ.
ಕೃಪೆ : ಬೆವರಹನಿ ಪತ್ರಿಕೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.
ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ22 hours agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ21 hours agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

