ದಿನದ ಸುದ್ದಿ
ಪ್ರಿಯ ತೇಜಸ್ವಿ..!
ಪೂರ್ಣಚಂದ್ರ ತೇಜಸ್ವಿಯವರ ‘ಕರ್ವಾಲೋ‘ ಕಾದಂಬರಿಯ ಬಗ್ಗೆ ಪಿ.ಲಂಕೇಶ್ ಬರೆದಿರುವ ಲೇಖನ ಇದು. ಈ ಲೇಖನ ಬರೆಯುವ ಹಿಂದಿನ ದಿನ ಕನ್ನಡ ‘ಓರಾಟಗಾರರು‘ ಲಂಕೇಶ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಘಾಸಿ ಮಾಡಿದ್ದರು. ದೈಹಿಕ ನೋವನ್ನು ನಿವಾರಿಸುವ ಉದಕದಂತೆ ‘ಕರ್ವಾಲೋ‘ ಕಾದಂಬರಿ ಒದಗಿಬಂದು, ಲಂಕೇಶರು ವಿಮರ್ಶೆಯ ಗದ್ಯಕ್ಕೂ ಕಾವ್ಯ ಸ್ಪರ್ಶ ನೀಡಿ ಬರೆದಿದ್ದು, ಓದುಗರನ್ನು ಸೆಳೆಯುತ್ತದೆ. ಕರ್ವಾಲೋ ಕಾದಂಬರಿಯ ಓದು ಲಂಕೇಶರಿಗೆ ದೈಹಿಕ ನೋವನ್ನು ನೀಗಿಸಿತೆಂದರೆ ಅಕ್ಷರ ಥೆರಪಿ ದೊಡ್ಡದೇ ನಿಜ.
ಪ್ರಿಯ ತೇಜಸ್ವಿ,
‘ಕನ್ನಡದ ಉಟ್ಟು ಓರಾಟಗಾರ’ರ ಕೆಲಸದಿಂದಾಗಿ ನನ್ನ ಮೈಯಲ್ಲಿ ಸರಿಯಿಲ್ಲದೆ ನಿಮಗೆ ಈ ಕಾಗದ ಬರೆಯುವುದು ತಡವಾಯಿತು. (ಆಗತಾನೆ ವಾಟಾಳ್ ನಾಗರಾಜ್ ಕಡೆಯವರಿಂದ ಲಂಕೇಶ್ ರ ಮೇಲೆ ಹಲ್ಲೆಯಾಗಿತ್ತು) ಹೊಡೆತದಿಂದಾಗಿ ಮೈಕೈ ನೋವಾಗಿ ಮಲಗಿದ್ದಾಗ ಕೂಡ ನನ್ನ ಕೋಣೆಯ ತುಂಬ ನಗೆ ಹಬ್ಬಿತ್ತು. ನನ್ನನ್ನು ನೋಡಿದವರು ಅಚ್ಚರಿ ಪಡುವ ರೀತಿಯಲ್ಲಿ ಗೆಲುವಾಗಿದ್ದೆ. ಇದಕ್ಕೆ ಕಾರಣ ನಿಮ್ಮ ಪುಸ್ತಕ ‘ಕರ್ವಾಲೋ.’
ನಿಮ್ಮ ಈ ‘ಕರ್ವಾಲೋ.’ ಕಾದಂಬರಿಯ ಮೇಲೆ ಒಳ್ಳೆಯ ವಿಮರ್ಶಕರು ಒಳ್ಳೊಳ್ಳೆಯ ವಿಮರ್ಶೆ ಬರೆಯಲಿದ್ದಾರೆ ಎಂಬ ಬಗ್ಗೆ ಅನುಮಾನವಿಲ್ಲ. ನನಗೆ ಓದಿದೊಡನೆ ಅನ್ನಿಸಿದ್ದನ್ನು ಬರೆಯುತ್ತಿದ್ದೇನೆ. ನನ್ನ ಸಂತೋಷವನ್ನು ನಮ್ಮ ಓದುಗರೂ ಪಡೆಯಲೆಂಬ ಕಾರಣಕ್ಕೆ ಇದನ್ನು ಅಚ್ಚು ಮಾಡುತ್ತಿದ್ದೇನೆ.
ನಿಮ್ಮ ಕಾದಂಬರಿಯಲ್ಲಿ ತುಂಬ ಒಳ್ಳೆಯದೆಂದು ಹೊಳೆದದ್ದು ನಿಮ್ಮ ತಮಾಷೆ ಮತ್ತು ಈ ತಮಾಷೆಯ ಮೂಲಕವೇ ನೀವು ನಿಜವಾಗಿಸುವ ಮನುಷ್ಯರು.
ನಮ್ಮ ಈ ಕೊಳೆತು ಹೋಗಿರುವ ಸಮಾಜದಲ್ಲಿ ಎಲ್ಲೆಲ್ಲೋ ಇದ್ದು ತಮ್ಮ ಜೀವನ ಸಾಗಿಸುವ, ತಮ್ಮ ಕೈಲಾದ್ದು ಮಾಡುವ ಮಂದಣ್ಣ ಮತ್ತು ಕರ್ವಾಲೋಗಳು ನಿಮ್ಮ ತಮಾಷೆಯನ್ನು ತೂರಿ ನಮ್ಮ ಮನಸ್ಸು ಕಲಕುತ್ತಾರೆ.
ಒಂದು ಕಡೆ ಮಂದಣ್ಣನಿದ್ದಾನೆ. ಹುಳಹುಪ್ಪಟೆಗಳನ್ನು ಹುಡುಕುತ್ತ ಹಿಡಿಯುತ್ತ ಹೋಗುವ ಈತನ ಪ್ರಕಾರ ಈತನ ಜೀವನದ ಏಕ ಮಾತ್ರ ಗುರು ‘ಮೇರೇಜ್’ ಆಗುವುದು. ಎಲ್ಲೆರೆದುರು ಮದುವೆಯಾಗಿ ಫೋಟೋ ಹಿಡಿಸಿಕೊಂಡು ನಾಲ್ಕೈದು ಮಕ್ಕಳು ಮಾಡುವ ಸದುದ್ದೇಶ ಉಳ್ಳ ಈತ ‘ಮೇರೇಜ್’ನಲ್ಲೇ ವಿಫಲ. ಹಳ್ಳಿಯ ಸಾಮಾನ್ಯ ಅಪಾಪೋಲಿಯಂತೆ ಕಾಣುವ ಈತನ ಸರಳ ಆಶೆಗಳು ಇವನ ಆಳದ ಮುಗ್ಧತೆಯನ್ನು ತೋರುತ್ತವೆ.
ಈ ಮುಗ್ಧತೆಯೊಂದಿಗೇ ಈತನನ್ನು ಇವನಿಗೆ ಗೊತ್ತಿಲ್ಲದಂತೆಯೇ ಸೆಳೆಯುವ ಪ್ರಕೃತಿಯ ಬಗೆಗಿನ ಕುತೂಹಲ ಇದೆ. ಈ ಕುತೂಹಲದಿಂದಾಗಿ ಈತ ಅತ್ಯಂತ ಅಕಾಡೆಮಿಕ್ ಆಗಿ ಕಾಣುವ ಮಾನವತಾವಾದಿ ಕರ್ವಾಲೋ ಎಂಬ ಫ್ರೊಫೆಸರ್ ಗೆ ಗೆಳೆಯನಾಗಿದ್ದಾನೆ.
ಕರ್ವಾಲೋವನ್ನು ನೀವು ಚಿತ್ರಿಸಿರುವ ರೀತಿಯಲ್ಲಿ ನಿಮ್ಮ ಪ್ರತಿಭೆ ಚೆನ್ನಾಗಿ ಕಾಣುತ್ತದೆ. ಮಂಗಳೂರರು ಕಡೆಯ ಬಡ ಪಾದ್ರಿಯಂತಿರುವ ಈತ ನೀವು ಸಂಶಯದಿಂದ ನೋಡುವ ಮತ್ತು ನಿಮ್ಮ ಆಳದಲ್ಲಿರುವ ಸಂಶೋಧಕನಿಗೆ ಸಂಕೇತವಾಗಿದ್ದಾನೆ. ಈ ಕರ್ವಾಲೋ ಕೂಡ ಮಂದಣ್ಣನಂತೆ ಹುಳಹುಪ್ಪಟೆ ಪ್ರಾಣಿಗಳನ್ನು ಕಂಡು ಅಭ್ಯಾಸ ಮಾಡುವ ಮನುಷ್ಯ.
ಈತನ ಶಿಸ್ತು ಜೀವನದ ಹುಚ್ಚು ಹೊಳೆಗೆ ಹಾಕಿದ ಅಣೆಕಟ್ಟಿನಂತಿದೆ. ಪ್ರಕೃತಿಯ ಲಕ್ಷೋಪಲಕ್ಷ ಜೀವಿಗಳ ಬಗ್ಗೆ ಕುತೂಹಲ ತೋರುತ್ತ ಮೇಲ್ನೋಟಕ್ಕೆ ಒಣಕಲು ಮನುಷ್ಯನಂತೆ ಕಾಣುವ ಈತನಲ್ಲಿ ಮಾನವೀಯತೆ ಇದೆ. ನಿಮ್ಮ ಮಂದಣ್ಣನ ಬಗೆಗಿನ ಹಾಸ್ಯದ ಹಿಂದೆ ಹರಿಯುವ ಪ್ರೀತಿಯಂತೆಯೇ ಈ ಕರ್ವಾಲೋನ ಶಿಸ್ತಿನ ಹಿಂದೆ ಹರಿಯುವ ಅದಮ್ಯ ಕುತೂಹಲ ನನ್ನನ್ನು ಹರ್ಷದಿಂದ ಅಲ್ಲಾಡಿಸಿದ ಅಂಶ.
ನನಗೆ ಈ ಕಾದಂಬರಿ ನಾಲ್ಕು ಮುಖ್ಯ ಕಾರಣಕ್ಕೆ ತುಂಬ ಚೆನ್ನಾಗಿದೆ. ಮೊದಲನೆಯದಾಗಿ ನೀವು ಬರೀ ಹಂಜಿಪುಟ್ಟಿ ಎಂಬಂಥ ಹಾಸ್ಯಶೈಲಿಯಲ್ಲಿ ಬರೆಯುತ್ತ, ರೇಗುತ್ತ, ತಡವರಿಸುತ್ತಾ ಮನುಷ್ಯರ ಜೀವನವನ್ನು ಚಿತ್ರಿಸುವ ಬಗೆ. ಲಕ್ಷ್ಮಣ, ಮಂದಣ್ಣ, ಕರಿಯಣ್ಣ, ಯಂಕ್ಟ ಮುಂತಾದವರು ನಿಮ್ಮ ಶೈಲಿಯ ಮೂಲಕ ಜೀವ ಪಡೆಯುತ್ತಾರೆ. ನಿಮ್ಮ ಭಾವನೆಯ ಏರಿಳಿತಗಳ ನಡುವೆ ಈ ಜನ ಎದ್ದು ಓಡಾಡತೊಡಗುತ್ತಾರೆ.
ಕೋಟ್ಯಂತರ ವರ್ಷಗಳ ಹಿಂದಿನಿಂದ ಇರುವ ಪ್ರಾಣಿಗಳನ್ನು ಹುಡುಕುತ್ತ ನೀವು ನಿಮ್ಮ ಸುತ್ತಣ ವಿವಿಧ ಮಟ್ಟದ ಜನರ ಹಲಬಗೆಯ ವಿಕಾಸ ಅಥವಾ ವಿಕಾಸಗೊಳ್ಳದಿರುವಿಕೆಯನ್ನು ಚಿತ್ರಿಸುವುದು. ನೀವು ನೋಡುವ ವ್ಯಕ್ತಿಗಳ ರೂಪ ಈ ಕಾದಂಬರಿಯ ವರ್ಟಿಕಲ್ ಮತ್ತು ಹಾರಿಜಾಂಟಲ್ ಗುಣ ತೋರುತ್ತದೆ. ಇದು ಎರಡನೆಯ ಅಂಶ.
ಮೂರನೆಯದಾಗಿ ನೀವು ತೋರುವ ಪ್ರಜ್ಞೆಯ ವಿಸ್ತಾರ ಮತ್ತು ಸಂಶೋಧನೆಯ ಸಂಭ್ರಮ. ಹೊಟ್ಟೆಪಾಡಿಗೆ ಪ್ರಾಣಿಶಾಸ್ತ್ರ ಕಲಿತು ‘ಸಂಶೋಧಿಸುವ’ ಜನರು ಈ ನಿಮ್ಮ ಕಾದಂಬರಿಯ ಸಂದರ್ಭದಲ್ಲಿ ಹಾಸ್ಶಾಸ್ಪದ ಅನ್ನಿಸುತ್ತಾರೆ.
ಆಮೇಲೆ ನಮ್ಮಲ್ಲಿ ಕೇವಲ ಸೋಷಲಿಸ್ಟನೊಬ್ಬ ಮಾತ್ರ ವರ್ಣಿಸಬಲ್ಲಂಥ ಅನೇಕ ಜಾತಿ ಜನ, ವರ್ಗಗಳನ್ನು ತಿಳಿದುಕೊಂಡು ಚಿತ್ರಿಸುವ, ಅತ್ಯಂತ ತೀವ್ರ ಆಸಕ್ತಿ ಮತ್ತು ಪ್ರೇಮದಿಂದ ಮಾತ್ರ ಕೈಗೂಡುವ ಗ್ರಹಿಕೆ. ಈ ಜೇಬುಗಳ್ಳನೆನ್ನಿಸಿಕೊಂಡ ಸಾಬರ ಪ್ಯಾರ ಹೇಗೆ ನಿಮ್ಮ ಮಾನವೀಯತೆಯಲ್ಲಿ ಮಗುವಾಗಿ ಹೊಂದಿಹೋಗುತ್ತಾನೆ!
ಎಲ್ಲಕ್ಕಿಂತ ಮುಖ್ಯವಾಗಿ ಪ್ರಕೃತಿಯ ಬಗ್ಗೆ ನಿಮಗಿರುವ ನಿಲುವು. ಈ ಕಾದಂಬರಿಯ ನಾಯಕ ಕೆಲವೊಮ್ಮೆ ಬೇಸರಗೊಂಡು ತನ್ನ ತೋಟ ಮಾರಿ ಪೇಟೆ ಸೇರಲು ತೀರ್ಮಾನಿಸುತ್ತಾನೆ. ಆದರೆ ಈ ಪ್ರಕೃತಿ ಅವನನ್ನು ಬಿಡುವುದಿಲ್ಲ.
ಮಂದಣ್ಣನೆಂಬ ಮನುಷ್ಯನ ಪ್ರಕೃತಿಯಿಂದ ಹಿಡಿದ ಹಾರುವ ಓತಿಕಾಟದ ಪ್ರಕೃತಿ ವಿಕಾಸದವರೆಗೆ ಈ ಅಪಾರ ಕುತೂಹಲ ಹಬ್ಬಿದೆ. ಕಾರಂತ, ಕುವೆಂಪು ತರುವಾಯ ಪ್ರಕೃತಿಯನ್ನು ಇಷ್ಟು ಆಳವಾಗಿ ಪ್ರೀತಿಸುವ ಮತ್ತು ಅದಕ್ಕೆ ತಕ್ಕ ಕಾರಣಗಳುಳ್ಳ ವ್ಯಕ್ತಿ ನೀವೇ ಎಂದು ಕಾಣುತ್ತದೆ. ಈ ಇಡೀ ಕಾದಂಬರಿ ಪ್ರಕೃತಿಯ ಅಗಾಧ ಕೌತುಕಕ್ಕೆ ಹಿಡಿದ ಕನ್ನಡಿಯಾಗಿದೆ.
ಮೇಲಿನ ಮಾತುಗಳನ್ನು ಕಷ್ಟಪಟ್ಟು ಬರೆಯುತ್ತಿದ್ದೇನೆ. ದಿನದಿನಕ್ಕೆ ನಮ್ಮ ಜನರ ಬದುಕು ಕ್ರೂರವೂ ಅರ್ಥಹೀನವೂ ಆಗುತ್ತಿದೆ. ನಮ್ಮ ಹಾಸ್ಯ, ಟೀಕೆಗಳನ್ನು ಮೀರಿದ ರಾಕ್ಷಸರ ಬೆಳವಣಿಗೆ ನಮ್ಮ ಎಲ್ಲ ಒಳ್ಳೆಯದಕ್ಕೆ ಸವಾಲಾಗುತ್ತಿದೆ. ನಮ್ಮ ಜನ ತಮ್ಮ ಹಳ್ಳಿ, ಪರಿಸರಕ್ಕೆ ಮೀರಿದ ದುಷ್ಟ ಶಕ್ತಿಗಳ ಗುಲಾಮರಾಗುತ್ತಿದ್ದಾರೆ. ಈ ಮಟ್ಟದಲ್ಲಿ ನೋಡಿದಾಗ ನಿಮ್ಮಂಥ ಬಹುಮುಖ್ಯ ಬರಹಗಾರರ ಲೇಖನಗಳು ಕೂಡ ಎಲ್ಲೋ ರೊಮ್ಯಾಂಟಿಕ್ ಅನ್ನಿಸುತ್ತಾ ಹೋತುತ್ತವೆ.
ಬೇಸರ ಪಡಬೇಡಿ. ಎಲ್ಲಾ ಸರಿಹೋದೀತು. ನಾನು ಕೂಡ ಕೆಲವೊಮ್ಮೆ ಈ ಮಂದಣ್ಣನಂತಿದ್ದರೆ ಎಷ್ಟು ಚೆನ್ನಾಗಿತ್ತು ಅಂದುಕೊಂಡಿದ್ದೇನೆ.
-ಪಿ.ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ2 days ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ4 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ4 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ
-
ದಿನದ ಸುದ್ದಿ3 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ