ದಿನದ ಸುದ್ದಿ
ಪ್ರಿಯ ತೇಜಸ್ವಿ..!
ಪೂರ್ಣಚಂದ್ರ ತೇಜಸ್ವಿಯವರ ‘ಕರ್ವಾಲೋ‘ ಕಾದಂಬರಿಯ ಬಗ್ಗೆ ಪಿ.ಲಂಕೇಶ್ ಬರೆದಿರುವ ಲೇಖನ ಇದು. ಈ ಲೇಖನ ಬರೆಯುವ ಹಿಂದಿನ ದಿನ ಕನ್ನಡ ‘ಓರಾಟಗಾರರು‘ ಲಂಕೇಶ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಘಾಸಿ ಮಾಡಿದ್ದರು. ದೈಹಿಕ ನೋವನ್ನು ನಿವಾರಿಸುವ ಉದಕದಂತೆ ‘ಕರ್ವಾಲೋ‘ ಕಾದಂಬರಿ ಒದಗಿಬಂದು, ಲಂಕೇಶರು ವಿಮರ್ಶೆಯ ಗದ್ಯಕ್ಕೂ ಕಾವ್ಯ ಸ್ಪರ್ಶ ನೀಡಿ ಬರೆದಿದ್ದು, ಓದುಗರನ್ನು ಸೆಳೆಯುತ್ತದೆ. ಕರ್ವಾಲೋ ಕಾದಂಬರಿಯ ಓದು ಲಂಕೇಶರಿಗೆ ದೈಹಿಕ ನೋವನ್ನು ನೀಗಿಸಿತೆಂದರೆ ಅಕ್ಷರ ಥೆರಪಿ ದೊಡ್ಡದೇ ನಿಜ.
ಪ್ರಿಯ ತೇಜಸ್ವಿ,
‘ಕನ್ನಡದ ಉಟ್ಟು ಓರಾಟಗಾರ’ರ ಕೆಲಸದಿಂದಾಗಿ ನನ್ನ ಮೈಯಲ್ಲಿ ಸರಿಯಿಲ್ಲದೆ ನಿಮಗೆ ಈ ಕಾಗದ ಬರೆಯುವುದು ತಡವಾಯಿತು. (ಆಗತಾನೆ ವಾಟಾಳ್ ನಾಗರಾಜ್ ಕಡೆಯವರಿಂದ ಲಂಕೇಶ್ ರ ಮೇಲೆ ಹಲ್ಲೆಯಾಗಿತ್ತು) ಹೊಡೆತದಿಂದಾಗಿ ಮೈಕೈ ನೋವಾಗಿ ಮಲಗಿದ್ದಾಗ ಕೂಡ ನನ್ನ ಕೋಣೆಯ ತುಂಬ ನಗೆ ಹಬ್ಬಿತ್ತು. ನನ್ನನ್ನು ನೋಡಿದವರು ಅಚ್ಚರಿ ಪಡುವ ರೀತಿಯಲ್ಲಿ ಗೆಲುವಾಗಿದ್ದೆ. ಇದಕ್ಕೆ ಕಾರಣ ನಿಮ್ಮ ಪುಸ್ತಕ ‘ಕರ್ವಾಲೋ.’
ನಿಮ್ಮ ಈ ‘ಕರ್ವಾಲೋ.’ ಕಾದಂಬರಿಯ ಮೇಲೆ ಒಳ್ಳೆಯ ವಿಮರ್ಶಕರು ಒಳ್ಳೊಳ್ಳೆಯ ವಿಮರ್ಶೆ ಬರೆಯಲಿದ್ದಾರೆ ಎಂಬ ಬಗ್ಗೆ ಅನುಮಾನವಿಲ್ಲ. ನನಗೆ ಓದಿದೊಡನೆ ಅನ್ನಿಸಿದ್ದನ್ನು ಬರೆಯುತ್ತಿದ್ದೇನೆ. ನನ್ನ ಸಂತೋಷವನ್ನು ನಮ್ಮ ಓದುಗರೂ ಪಡೆಯಲೆಂಬ ಕಾರಣಕ್ಕೆ ಇದನ್ನು ಅಚ್ಚು ಮಾಡುತ್ತಿದ್ದೇನೆ.
ನಿಮ್ಮ ಕಾದಂಬರಿಯಲ್ಲಿ ತುಂಬ ಒಳ್ಳೆಯದೆಂದು ಹೊಳೆದದ್ದು ನಿಮ್ಮ ತಮಾಷೆ ಮತ್ತು ಈ ತಮಾಷೆಯ ಮೂಲಕವೇ ನೀವು ನಿಜವಾಗಿಸುವ ಮನುಷ್ಯರು.
ನಮ್ಮ ಈ ಕೊಳೆತು ಹೋಗಿರುವ ಸಮಾಜದಲ್ಲಿ ಎಲ್ಲೆಲ್ಲೋ ಇದ್ದು ತಮ್ಮ ಜೀವನ ಸಾಗಿಸುವ, ತಮ್ಮ ಕೈಲಾದ್ದು ಮಾಡುವ ಮಂದಣ್ಣ ಮತ್ತು ಕರ್ವಾಲೋಗಳು ನಿಮ್ಮ ತಮಾಷೆಯನ್ನು ತೂರಿ ನಮ್ಮ ಮನಸ್ಸು ಕಲಕುತ್ತಾರೆ.
ಒಂದು ಕಡೆ ಮಂದಣ್ಣನಿದ್ದಾನೆ. ಹುಳಹುಪ್ಪಟೆಗಳನ್ನು ಹುಡುಕುತ್ತ ಹಿಡಿಯುತ್ತ ಹೋಗುವ ಈತನ ಪ್ರಕಾರ ಈತನ ಜೀವನದ ಏಕ ಮಾತ್ರ ಗುರು ‘ಮೇರೇಜ್’ ಆಗುವುದು. ಎಲ್ಲೆರೆದುರು ಮದುವೆಯಾಗಿ ಫೋಟೋ ಹಿಡಿಸಿಕೊಂಡು ನಾಲ್ಕೈದು ಮಕ್ಕಳು ಮಾಡುವ ಸದುದ್ದೇಶ ಉಳ್ಳ ಈತ ‘ಮೇರೇಜ್’ನಲ್ಲೇ ವಿಫಲ. ಹಳ್ಳಿಯ ಸಾಮಾನ್ಯ ಅಪಾಪೋಲಿಯಂತೆ ಕಾಣುವ ಈತನ ಸರಳ ಆಶೆಗಳು ಇವನ ಆಳದ ಮುಗ್ಧತೆಯನ್ನು ತೋರುತ್ತವೆ.
ಈ ಮುಗ್ಧತೆಯೊಂದಿಗೇ ಈತನನ್ನು ಇವನಿಗೆ ಗೊತ್ತಿಲ್ಲದಂತೆಯೇ ಸೆಳೆಯುವ ಪ್ರಕೃತಿಯ ಬಗೆಗಿನ ಕುತೂಹಲ ಇದೆ. ಈ ಕುತೂಹಲದಿಂದಾಗಿ ಈತ ಅತ್ಯಂತ ಅಕಾಡೆಮಿಕ್ ಆಗಿ ಕಾಣುವ ಮಾನವತಾವಾದಿ ಕರ್ವಾಲೋ ಎಂಬ ಫ್ರೊಫೆಸರ್ ಗೆ ಗೆಳೆಯನಾಗಿದ್ದಾನೆ.
ಕರ್ವಾಲೋವನ್ನು ನೀವು ಚಿತ್ರಿಸಿರುವ ರೀತಿಯಲ್ಲಿ ನಿಮ್ಮ ಪ್ರತಿಭೆ ಚೆನ್ನಾಗಿ ಕಾಣುತ್ತದೆ. ಮಂಗಳೂರರು ಕಡೆಯ ಬಡ ಪಾದ್ರಿಯಂತಿರುವ ಈತ ನೀವು ಸಂಶಯದಿಂದ ನೋಡುವ ಮತ್ತು ನಿಮ್ಮ ಆಳದಲ್ಲಿರುವ ಸಂಶೋಧಕನಿಗೆ ಸಂಕೇತವಾಗಿದ್ದಾನೆ. ಈ ಕರ್ವಾಲೋ ಕೂಡ ಮಂದಣ್ಣನಂತೆ ಹುಳಹುಪ್ಪಟೆ ಪ್ರಾಣಿಗಳನ್ನು ಕಂಡು ಅಭ್ಯಾಸ ಮಾಡುವ ಮನುಷ್ಯ.
ಈತನ ಶಿಸ್ತು ಜೀವನದ ಹುಚ್ಚು ಹೊಳೆಗೆ ಹಾಕಿದ ಅಣೆಕಟ್ಟಿನಂತಿದೆ. ಪ್ರಕೃತಿಯ ಲಕ್ಷೋಪಲಕ್ಷ ಜೀವಿಗಳ ಬಗ್ಗೆ ಕುತೂಹಲ ತೋರುತ್ತ ಮೇಲ್ನೋಟಕ್ಕೆ ಒಣಕಲು ಮನುಷ್ಯನಂತೆ ಕಾಣುವ ಈತನಲ್ಲಿ ಮಾನವೀಯತೆ ಇದೆ. ನಿಮ್ಮ ಮಂದಣ್ಣನ ಬಗೆಗಿನ ಹಾಸ್ಯದ ಹಿಂದೆ ಹರಿಯುವ ಪ್ರೀತಿಯಂತೆಯೇ ಈ ಕರ್ವಾಲೋನ ಶಿಸ್ತಿನ ಹಿಂದೆ ಹರಿಯುವ ಅದಮ್ಯ ಕುತೂಹಲ ನನ್ನನ್ನು ಹರ್ಷದಿಂದ ಅಲ್ಲಾಡಿಸಿದ ಅಂಶ.
ನನಗೆ ಈ ಕಾದಂಬರಿ ನಾಲ್ಕು ಮುಖ್ಯ ಕಾರಣಕ್ಕೆ ತುಂಬ ಚೆನ್ನಾಗಿದೆ. ಮೊದಲನೆಯದಾಗಿ ನೀವು ಬರೀ ಹಂಜಿಪುಟ್ಟಿ ಎಂಬಂಥ ಹಾಸ್ಯಶೈಲಿಯಲ್ಲಿ ಬರೆಯುತ್ತ, ರೇಗುತ್ತ, ತಡವರಿಸುತ್ತಾ ಮನುಷ್ಯರ ಜೀವನವನ್ನು ಚಿತ್ರಿಸುವ ಬಗೆ. ಲಕ್ಷ್ಮಣ, ಮಂದಣ್ಣ, ಕರಿಯಣ್ಣ, ಯಂಕ್ಟ ಮುಂತಾದವರು ನಿಮ್ಮ ಶೈಲಿಯ ಮೂಲಕ ಜೀವ ಪಡೆಯುತ್ತಾರೆ. ನಿಮ್ಮ ಭಾವನೆಯ ಏರಿಳಿತಗಳ ನಡುವೆ ಈ ಜನ ಎದ್ದು ಓಡಾಡತೊಡಗುತ್ತಾರೆ.
ಕೋಟ್ಯಂತರ ವರ್ಷಗಳ ಹಿಂದಿನಿಂದ ಇರುವ ಪ್ರಾಣಿಗಳನ್ನು ಹುಡುಕುತ್ತ ನೀವು ನಿಮ್ಮ ಸುತ್ತಣ ವಿವಿಧ ಮಟ್ಟದ ಜನರ ಹಲಬಗೆಯ ವಿಕಾಸ ಅಥವಾ ವಿಕಾಸಗೊಳ್ಳದಿರುವಿಕೆಯನ್ನು ಚಿತ್ರಿಸುವುದು. ನೀವು ನೋಡುವ ವ್ಯಕ್ತಿಗಳ ರೂಪ ಈ ಕಾದಂಬರಿಯ ವರ್ಟಿಕಲ್ ಮತ್ತು ಹಾರಿಜಾಂಟಲ್ ಗುಣ ತೋರುತ್ತದೆ. ಇದು ಎರಡನೆಯ ಅಂಶ.
ಮೂರನೆಯದಾಗಿ ನೀವು ತೋರುವ ಪ್ರಜ್ಞೆಯ ವಿಸ್ತಾರ ಮತ್ತು ಸಂಶೋಧನೆಯ ಸಂಭ್ರಮ. ಹೊಟ್ಟೆಪಾಡಿಗೆ ಪ್ರಾಣಿಶಾಸ್ತ್ರ ಕಲಿತು ‘ಸಂಶೋಧಿಸುವ’ ಜನರು ಈ ನಿಮ್ಮ ಕಾದಂಬರಿಯ ಸಂದರ್ಭದಲ್ಲಿ ಹಾಸ್ಶಾಸ್ಪದ ಅನ್ನಿಸುತ್ತಾರೆ.
ಆಮೇಲೆ ನಮ್ಮಲ್ಲಿ ಕೇವಲ ಸೋಷಲಿಸ್ಟನೊಬ್ಬ ಮಾತ್ರ ವರ್ಣಿಸಬಲ್ಲಂಥ ಅನೇಕ ಜಾತಿ ಜನ, ವರ್ಗಗಳನ್ನು ತಿಳಿದುಕೊಂಡು ಚಿತ್ರಿಸುವ, ಅತ್ಯಂತ ತೀವ್ರ ಆಸಕ್ತಿ ಮತ್ತು ಪ್ರೇಮದಿಂದ ಮಾತ್ರ ಕೈಗೂಡುವ ಗ್ರಹಿಕೆ. ಈ ಜೇಬುಗಳ್ಳನೆನ್ನಿಸಿಕೊಂಡ ಸಾಬರ ಪ್ಯಾರ ಹೇಗೆ ನಿಮ್ಮ ಮಾನವೀಯತೆಯಲ್ಲಿ ಮಗುವಾಗಿ ಹೊಂದಿಹೋಗುತ್ತಾನೆ!
ಎಲ್ಲಕ್ಕಿಂತ ಮುಖ್ಯವಾಗಿ ಪ್ರಕೃತಿಯ ಬಗ್ಗೆ ನಿಮಗಿರುವ ನಿಲುವು. ಈ ಕಾದಂಬರಿಯ ನಾಯಕ ಕೆಲವೊಮ್ಮೆ ಬೇಸರಗೊಂಡು ತನ್ನ ತೋಟ ಮಾರಿ ಪೇಟೆ ಸೇರಲು ತೀರ್ಮಾನಿಸುತ್ತಾನೆ. ಆದರೆ ಈ ಪ್ರಕೃತಿ ಅವನನ್ನು ಬಿಡುವುದಿಲ್ಲ.
ಮಂದಣ್ಣನೆಂಬ ಮನುಷ್ಯನ ಪ್ರಕೃತಿಯಿಂದ ಹಿಡಿದ ಹಾರುವ ಓತಿಕಾಟದ ಪ್ರಕೃತಿ ವಿಕಾಸದವರೆಗೆ ಈ ಅಪಾರ ಕುತೂಹಲ ಹಬ್ಬಿದೆ. ಕಾರಂತ, ಕುವೆಂಪು ತರುವಾಯ ಪ್ರಕೃತಿಯನ್ನು ಇಷ್ಟು ಆಳವಾಗಿ ಪ್ರೀತಿಸುವ ಮತ್ತು ಅದಕ್ಕೆ ತಕ್ಕ ಕಾರಣಗಳುಳ್ಳ ವ್ಯಕ್ತಿ ನೀವೇ ಎಂದು ಕಾಣುತ್ತದೆ. ಈ ಇಡೀ ಕಾದಂಬರಿ ಪ್ರಕೃತಿಯ ಅಗಾಧ ಕೌತುಕಕ್ಕೆ ಹಿಡಿದ ಕನ್ನಡಿಯಾಗಿದೆ.
ಮೇಲಿನ ಮಾತುಗಳನ್ನು ಕಷ್ಟಪಟ್ಟು ಬರೆಯುತ್ತಿದ್ದೇನೆ. ದಿನದಿನಕ್ಕೆ ನಮ್ಮ ಜನರ ಬದುಕು ಕ್ರೂರವೂ ಅರ್ಥಹೀನವೂ ಆಗುತ್ತಿದೆ. ನಮ್ಮ ಹಾಸ್ಯ, ಟೀಕೆಗಳನ್ನು ಮೀರಿದ ರಾಕ್ಷಸರ ಬೆಳವಣಿಗೆ ನಮ್ಮ ಎಲ್ಲ ಒಳ್ಳೆಯದಕ್ಕೆ ಸವಾಲಾಗುತ್ತಿದೆ. ನಮ್ಮ ಜನ ತಮ್ಮ ಹಳ್ಳಿ, ಪರಿಸರಕ್ಕೆ ಮೀರಿದ ದುಷ್ಟ ಶಕ್ತಿಗಳ ಗುಲಾಮರಾಗುತ್ತಿದ್ದಾರೆ. ಈ ಮಟ್ಟದಲ್ಲಿ ನೋಡಿದಾಗ ನಿಮ್ಮಂಥ ಬಹುಮುಖ್ಯ ಬರಹಗಾರರ ಲೇಖನಗಳು ಕೂಡ ಎಲ್ಲೋ ರೊಮ್ಯಾಂಟಿಕ್ ಅನ್ನಿಸುತ್ತಾ ಹೋತುತ್ತವೆ.
ಬೇಸರ ಪಡಬೇಡಿ. ಎಲ್ಲಾ ಸರಿಹೋದೀತು. ನಾನು ಕೂಡ ಕೆಲವೊಮ್ಮೆ ಈ ಮಂದಣ್ಣನಂತಿದ್ದರೆ ಎಷ್ಟು ಚೆನ್ನಾಗಿತ್ತು ಅಂದುಕೊಂಡಿದ್ದೇನೆ.
-ಪಿ.ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ನಿಂದ ವಿದ್ಯಾರ್ಥಿ ವೇತನ ವಿತರಣೆ
ಸುದ್ದಿದಿನ,ದಾವಣಗೆರೆ:ಗುರಿ ಸಾಧಿಸಲು ಕಾರಣಗಳು ನೆಪವಾಗಬಾರದು. ಗುರಿಯನ್ನು ಬೆನ್ನು ಹತ್ತಿ ಗುರಿಮುಟ್ಟುವ ಕಡೆ ಗಮನ ಹರಿಸಿದರೆ ಯಶಸ್ಸು ತಾನಾಗಿ ದೊರೆಯುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಉಮಾ ಪ್ರಶಾಂತ್ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಯುವಜನತೆ ಮೊಬೈಲ್ ಬಳಸುವುದರಿಂದ ಆಗುವ ಅನಾನುಕೂಲಗಳು ಮತ್ತು ಹಿಂದಿನ ಯುವಜನತೆ ಅದನ್ನು ಒಳ್ಳೆಯ ಉದ್ದೇಶಕ್ಕಾಗಿ ಬಳಸಿಕೊಳ್ಳಬೇಕೆಂದು ಕರೆ ನೀಡಿದರು.
ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದರ ಮುಖಾಂತರ ತಮ್ಮ ಗುರಿಗಳನ್ನು ಸಾಧಿಸಲು ಸಾಧ್ಯವಿದೆ. ಪೋಷಕರು ಮಕ್ಕಳ ನಡವಳಿಕೆ ಮೇಲೆ ನಿಗಾ ವಹಿಸುವ ಅವಶ್ಯಕತೆ ಇದೆ ಎಂದ ಅವರು, ಇತ್ತೀಚಿಗೆ ನಡೆಯುತ್ತಿರುವ ಸೈಬರ್ ಕ್ರೈಂಗಳ ಬಗ್ಗೆ ಯುವಜನತೆಗೆ ಸಭೆಯಲ್ಲಿ ಮನವರಿಕೆ ಮಾಡಿದರು.
ಈ ಕಾರ್ಯಕ್ರಮದ ಮತ್ತೊಬ್ಬ ಅತಿಥಿಗಳಾದ ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ಸಿಓಓ ಎಸ್. ಪಂಚಾಕ್ಷರಿ ಮಾತನಾಡಿ, ಬಿ.ಎಸ್.ಎಸ್ ಸಂಸ್ಥೆಯು ತನ್ನ ಸಿಎಸ್ಆರ್ ಇಂಟಿಗ್ರೇಟಡ್ ಅಡಿಯಲ್ಲಿ ಆರೋಗ್ಯ, ಶಿಕ್ಷಣ, ಹೈನುಗಾರಿಕೆಗಳಲ್ಲಿ ಸಮಾಜಸೇವಾ ಕಾರ್ಯ ಮಾಡುತ್ತಿದ್ದು, ಅಗತ್ಯ ಪೂರಕ ವಸ್ತುಗಳ ವಿತರಣೆ ಮತ್ತು ಸಹಾಯ ಹಸ್ತದ ನೆರವು ನೀಡಲಾಗುತ್ತಿದೆ. ಸಮಜಾಮುಖಿ ಕೆಲಸಗಳಲ್ಲಿ ಒಂದಾದ ವಿದ್ಯಾರ್ಥಿ ವೇತನ ವಿತರಣೆ ಮುಖೇನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವು ನೀಡಲಾಗುತ್ತಿದೆ ಎಂದರು.
ಮಹಿಳೆಯರು ಅವಶ್ಯಕತೆಗೆ ತಕ್ಕಷ್ಟು ಸಾಲವನ್ನು ಪಡೆದು ಮರುಪಾವತಿ ಶಿಸ್ತನ್ನು ಕಾಪಾಡಿಕೊಳ್ಳಬೇಕು ಮತ್ತು ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಕೇವಲ ಸಾಲ ಸೌಲಭ್ಯವನ್ನು ಮಾತ್ರವಲ್ಲದೆ ಸಂಸ್ಥೆಯು ಎಲ್ಲಾ ಕಡೆಗೂ ಸಮಾಜಮುಖಿ ಕಾರ್ಯಗಳಾದ ಶಾಲಾ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರವಾಹ ಪರಿಸ್ಥಿತಿಗಳು, ಬರಗಾಲ ಪರಿಸ್ಥಿತಿಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ವ್ಯವಸ್ಥೆ, ಪೀಟೋಪಕರಣಗಳ ವ್ಯವಸ್ಥೆ, ಆಧುನಿಕ ಶಿಕ್ಷಣ ನೀಡಲು ಕಂಪ್ಯೂಟರ್ ಒದಗಿಸುವುದು ಸೇರಿದಂತೆ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಬಿಎಸ್ಎಸ್ ಸಂಸ್ಥೆಯ ಸಿಇಓ ಕುಮಾರ್, ಸಿಫ್ ಓ ಸುರತ್ ಬಚ್ಚು, ರಘು ಎನ್.ಸಿ., ಕೆ. ಸಿದ್ದು, ತಿಮ್ಮಾರಾಯಸ್ವಾಮಿ, ಎಸ್. ಗಿರೀಶ್, ಪಂಡಿತ್, ದೇವರಾಜ್ ಎಸ್., ಸತೀಶ ಡಿ.ಎಸ್., ಕಿರಣ್, ಪ್ರಶಾಂತ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಅಂತರಂಗ
ದಾವಣಗೆರೆ| ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ : ಜಾನಪದರನ್ನು ಅನಕ್ಷರಸ್ಥರೆನ್ನುವುದು ತಪ್ಪು : ಸಾಹಿತಿ ಕೃಷ್ಣಮೂರ್ತಿ ಹನೂರು
ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ ಬಾರದವರು ಅನಕ್ಷಸ್ಥರು ಎಂಬುದಾಗಿ ಹೇಳುವುದು ತಪ್ಪು ಎಂದು ಹಿರಿಯ ವಿದ್ವಾಂಸರಾದ ಕೃಷ್ಣಮೂರ್ತಿ ಹನೂರು ವಿಷಾದವ್ಯಕ್ತಪಡಿಸಿದರು.
ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿರಿಯಜ್ಜಿ ಪ್ರತಿಷ್ಠಾನ, ಮಾನವ ಬಂಧುತ್ವ ವೇದಿಕೆ ಹಾಗೂ ಅಮಿತ ಪ್ರಕಾಶನದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಾಂಶುಪಾಲ ಎಂ.ಮಂಜಣ್ಣ ಅವರ ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ ಮಾಡಿ ಅವರು ಮಾತನಾಡಿದರು.
ಸಿರಿಯಜ್ಜಿ ಭೇಟಿ ಮಾಡಿ ಸುಮಾರು 50ವರ್ಷ ಆಯಿತು.ಬೆಳೆಗೆರೆ ಕೃಷ್ಣಶಾಸ್ತ್ರಿಗಳ ಜೊತೆಗೆ ಮೊದಲ ಬಾರಿಗೆ ಗುಡಿಸಲಿನ ಭೇಟಿ ಮಾಡಿದ್ದೆ. ಆಡಿನ ಹಾಲು ಕರೆದು ಜತೆಗೆ ಮುದ್ದೆ ಕೊಡುತ್ತಿದ್ದರು. ಅದು 76ರ ಈ ಇಳಿವಯಸ್ಸಿನಲ್ಲೂ ನನಗೆ ಶಕ್ತಿ ಕೊಟ್ಟಿದೆ. ಪಾಶ್ಚಾತ್ಯ ವಿದ್ವಾಂಸರು 1800 ಸಂದರ್ಭದಲ್ಲಿ ದೇಶದಲ್ಲಿ ಹುಡುಕಿ ಹೊತ್ತೊಯ್ಯುವ ಕೆಲಸ ಮಾಡಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ಅವರಿಗೆ ಅಭಿಮಾನ ಇತ್ತು. ಬುಡಕಟ್ಟು ಹಟ್ಟಿಯ ಸಿರಿಯಜ್ಜಿ ದೊಡ್ಡ ವಿದ್ವಾಂಸರು. ಅರೆ ಬರ ಕನ್ನಡ ಓದಿ ಎಲ್ಲವೂ ಗೊತ್ತದೆ ಎನ್ನುತ್ತೇವೆ. ಆದರೆ, ಸಿರಿಯಜ್ಜಿ ತನ್ನ ಬೌದ್ಧಿಕ ಶಕ್ತಿಯನ್ನು ಏನೂ ಅಲ್ಲ ಎಂದು ಹೇಳುತ್ತಿದ್ದರು. ‘ಹತ್ತ ಮಕ್ಕಳ ಹೆತ್ತು ಕತ್ತಿಗೆ ಬಲಿಕೊಟ್ಟೆ’ ಎಂಬ ಮಾತು ದೊಡ್ಡದು. ಇದರಲ್ಲಿ ದೊಡ್ಡ ಸಂದೇಶ ಇತ್ತು ಎಂದು ಸ್ಮರಿಸಿದರು.
ಅವಳ ಹಾಡುಗಾರಿಕೆಯ ಕ್ರಮ ವಿಸ್ಮಯ ಮೂಡಿಸುತ್ತಿತ್ತು. ನೋವಿನ ವಾಕ್ಯದಲ್ಲಿ ಇರುವ ಅರ್ಥ ಬಹಳ ದೊಡ್ಡದು. ಚರಿತ್ರೆಯನ್ನು ನಾಲ್ಕು ಪದಗಳಲ್ಲಿ ವಿಶ್ಲೇಷಣೆ ಮಾಡಿದಳು. . 100ಕ್ಕೂ ಹೆಚ್ಚು ತ್ರಿಪದಿಯಲ್ಲಿ ಸಿರಿಯಜ್ಜಿ ಹಾಡಿದ್ದಾಳೆ. ಸಮಾಜಿಕ, ಐತಿಹಾಸಿಕ, ಸಂತೋಷದ ಸಂಗತಿ, ಮಳೆರಾಯನ ಕುರಿತು ಹಾಡು ಹೇಳಿದ್ದಾಳೆ. ಮದುವೆ ಸಂಭ್ರದ ಸಾವಿರಾರು ತ್ರಿಪದಿ ಅವಳಲ್ಲಿದ್ದವು.ಶಿಷ್ಟ ಮತ್ತು ಜಾನಪದ ಸಾಹಿತ್ಯ ಈ ಎರಡರಲ್ಲೂ ಕೆಟ್ಟದ್ದು ಒಳ್ಳೆಯದು ಇದೆ. ಇದರ ಬಗೆಗೆ ಇನ್ನೂಹೆಚ್ಚಿನ ಅಧ್ಯಯನ ನಡೆಸಿ ಪ್ರಾಧ್ಯಾಪಕರು ಚರ್ಚಿಸಬೇಕಿದೆ. ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು.
ಅನಕ್ಷರಸ್ಥರಲ್ಲಿ ಕೂಡ ವಿದ್ವಾಂಸರು ಇದ್ದಾರೆ. ಸಿರಿಯಜ್ಜಿ ರೀತಿಯವರು ಅಸಂಖ್ಯಾತರಷ್ಟು ಇದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿ ಮಾನವನನ್ನೇ ನಾಶ ಮಾಡುತ್ತಿದೆ. ಜನಪದರ, ಗ್ರಾಮೀಣ ಪ್ರದೇಶದ ಒಳಿತನ್ನು ಸ್ವೀಕರಿಸುವ ಮನೋಭಾವ ಉಳಿಸಿಕೊಳ್ಳೋಣ’.ಎ.ಕೆ.ರಾಮಾನುಜನ್, ಎಸ್.ಎಲ್.ಭೈರಪ್ಪ, ಗುಂಡೂರಾವ್, ಎಚ್.ಕೆ.ರಂಗನಾಥ್ ಸೇರಿ ಅನೇಕರು ಸಿರಿಯಜ್ಜಿ ಹುಡುಕಿಕೊಂಡು ಬಂದಿದ್ದರು. ಪ್ರಾಧ್ಯಾಪಕರು ಇದನ್ನು ಗುರುತಿಸಿ ಹೇಳಬೇಕು. ಮಕ್ಕಳಿಗೆ ಪಾಠ ಮಾಡಿದರೆ ಪ್ರಾಧ್ಯಾಪಕರ ಕಾರ್ಯ ಮುಗಿಯುದಿಲ್ಲ ಎಂದು ಕಿವಿಮಾತು ಹೇಳಿದರು.
ಅನಕ್ಷರಸ್ಥರು ಎಂದು ಹೇಳುವುದು ನಮ್ಮ ಅಜ್ಞಾನ ತೋರಿಸುತ್ತದೆ. ವಿಶ್ವವಿದ್ಯಾಲಯದ್ದು ಸೀಮಿತ ಪಠ್ಯ, ಜಾನಪದದ್ದು ಅಲಿಖಿತ ಸಂವಿಧಾನ, ಅಪರಿಮಿತ ಪಠ್ಯ ಇದು ಕೂಡ ಮುಖ್ಯ.‘ಸಾವಿರದ ಸಿರಿ ಬೆಳಕು’ ಹಂಪಿ ವಿಶ್ವವಿದ್ಯಾಲಯ ಹೊರತಂದಿದೆ. ಅಪ್ರಕಟಿತ ಗೀತೆಗಳು ಇನ್ನೂ ಇವೆ. ಅಕ್ಷರಕ್ಕೆ ಅಳಿವಿಲ್ಲ. ದೇಶದ ಉತ್ತಮ ಸಂಗತಿ, ಪಳಯುಳಿಕೆ ಅಮೆರಿಕಾ, ಇಂಗ್ಲೆಂಡ್ ನಲ್ಲಿವೆ.ಎಚ್ಚರಿಕೆ, ಗಮನ ಹರಿಸಬೇಕು ಪ್ರಾಧ್ಯಾಪಕರು. ಮಕ್ಕಳ ಆಸ್ತಿ ಯಾವುದು ಎಂಬುದನ್ನು ನಾವು ಮನವರಿಕೆ ಮಾಡಿಕೊಡಬೇಕಿದೆ ಎಂದು ಹಂಪಿ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಎಸ್.ಎಂ.ಮುತ್ತಯ್ಯ ಅಭಿಪ್ರಾಯಪಟ್ಟರು.
ಮನುಷ್ಯರೆಂಬಂತೆ ಸಮಾಜ ಕಾಣದ ಸಮುದಾಯದ ಮಹಿಳೆ ಬಗ್ಗೆ ನಡೆಸಿದ ಅಧ್ಯಯನಕ್ಕೆ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಚಿಕ್ಕ ಸಂಗತಿಗೂ ನಿರ್ಬಂಧ ಹೇರುವ ಸಮುದಾಯದಲ್ಲಿ ದೊಡ್ಡ ಕಲಾವಿದೆಯೊಬ್ಬರೂ ಹೊರಹೊಮ್ಮಿದ ರೀತಿ ವಿಸ್ಮಯ ಮೂಡಿಸುತ್ತದೆ.ಸಿರಿಯಜ್ಜಿ ಸೃಷ್ಟಿಸಿದ್ದು ಸಾಹಿತ್ಯ ಅಲ್ಲ. ಇದು ಸಮುದಾಯಕ್ಕೆ ಪರಂಪರಾಗತವಾಗಿ ಬಂದದ್ದು. ಇದು ಕಾಡುಗೊಲ್ಲ ಮಾತ್ರವಲ್ಲ ಪಶುಪಾಲನಾ ಸಮುದಾಯದ ಅಸ್ಮಿತೆ ಕೂಡ ಹೌದು. ಕಾಡಲ್ಲಿ ಕುರಿ, ಜಾನುವಾರು ಕಾಯುತ್ತ ಬದುಕುತ್ತಿದ್ದ ಸಮುದಾಯದ ಕಲೆಗಳಿಗೆ ಮಾನ್ಯತೆ ಸಿಕ್ಕಿರಲಿಲ್ಲ. ಸಾಹಿತ್ಯ ಪರಂಪರೆಯಲ್ಲಿ ಜಾನಪದಕ್ಕೆ ಮಾನ್ಯತೆ ಸಿಕ್ಕಿದ್ದು ಜಿ.ಶಂ.ಪರಮಶಿವಯ್ಯ ಹಾಗೂ ಹಾ.ಮಾ.ನಾಯಕ ಸಾಕಷ್ಟು ಕಷ್ಟಪಟ್ಟಿದ್ದಾರೆ. ಜಾನಪದ ಸಾಹಿತ್ಯ ಕೂಡ ಸಂಶೋಧನೆಗೆ ಯೋಗ್ಯ ಕ್ಷೇತ್ರ ಮತ್ತು ವಸ್ತು ಎಂಬುದನ್ನು ಒಪ್ಪಿಸಲು ಸಾಕಷ್ಟು ಶ್ರಮಿಸಬೇಕಾಯಿತು ಎಂದು ಮೆಲುಕುಹಾಕಿದರು.
ಜಾನಪದ ಅಧ್ಯಯನ ವಿಸ್ತರಣೆ ಕಂಡ, ಮುಖ್ಯ ವಾಹಿನಿಯಲ್ಲಿ ಸ್ಥಾನ ಪಡೆದುಕೊಂಡ ಮೂರನೇ ಘಟ್ಟವಾಗಿ ಈ ಕೃತಿ ನೋಡಬೇಕು. ಶೈಕ್ಷಣಿಕ ಅಧ್ಯಯನದ ವಸ್ತವಾಗಿ ಸಿರಿಯಜ್ಜಿ ಪರಿಣಿಸಿ ಸಂಶೋಧನೆಗೆ ಒಳಪಡಿಸಿದ್ದಕ್ಕೆ ಹೆಮ್ಮೆ ಪಡಬೇಕು. ಜಾನಪದ ಅಧ್ಯಯನದ ಇತಿಹಾಸದಲ್ಲಿ ಹೊಸದೊಂದು ಪರ್ವ ಶುರು ಆಗಿದೆ.ಕಾಡು ಗೊಲ್ಲರಂತಹ ನಿರ್ಬಂಧಿತ ಸಮುದಾಯದ ಮಹಿಳೆಯೊಬ್ಬರು ಇಷ್ಟು ಎತ್ತರಕ್ಕೆ ಬೆಳೆಯುವ ಅವಕಾಶ ಸಿಕ್ಕಿದ್ದು ವಿಸ್ಮಯ. ಅವರ ಒಳಗಿನ ಆಸಕ್ತಿ, ಪ್ರಯತ್ನ ಹಾಗೂ ಕುಟುಂಬದ ಬೆಂಬಲದ ಕಾರಣಕ್ಕೆ ಅವಳಿಗೆ ಇದು ಸಾಧ್ಯ ಆಯಿತು. ಕಾಡಗೊಲ್ಲರ, ಸಾಂಸ್ಕೃತಿಕ ವೀರರ ಆರಾಧ್ಯ ದೈವ, ಬೇರೆ ಸಮುದಾಯದ ದೈವಗಳ ಬಗ್ಗೆ ಸಿರಿಯಜ್ಜಿ ಹಾಡಿದ್ದಾರೆ. ಹಾಡುವ ಸಾಹಿತ್ಯದಲ್ಲಿ ಭೇದ ಮಾಡಿಲ್ಲ. ಸಾಹಿತ್ಯದ ಪದ-ಪದದ ವಿವರಗಳನ್ನು ಅವಳು ನೀಡುತ್ತಿದ್ದಳು. ಕಾವ್ಯ ಅವಳ ಬದುಕಿನ ಭಾಗ ಆಗಿತ್ತು. ಹೀಗಾಗಿ ಅವಳು ನಿರರ್ಗಳವಾಗಿ ಹಾಡುತ್ತದ್ದಳು. ಆದರೆ, ಒಬ್ಬ ವ್ಯಕ್ತಿ ಇಷ್ಟು ಪದಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವೇ ಎಂಬ ಪ್ರಶ್ನೆ ಮೂಡುತ್ತದೆ ಎಂದರು.
ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಎ.ಬಿ.ರಾಮಚಂದ್ರಪ್ಪ, ಜಾನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ್ ಕಲಮರಹಳ್ಳಿ, ಸಿರಿಯಜ್ಜಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ, ಕಲಾವಿದೆ ಸಿರಿಯಮ್ಮ, ಜಿ.ಕೆ.ಪ್ರೇಮಾ, ಅಮಿತ ಪ್ರಕಾಶನದ ಶಾರದಮ್ಮ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ
ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆ ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗದು ರಹಿತ ಚಿಕಿತ್ಸೆ ಯೋಜನೆಯ ತ್ವರಿತ ಜಾರಿಗೆ ಒತ್ತಾಯಿಸುವುದು, 2026ಕ್ಕೆ ಕೇಂದ್ರ ಸರ್ಕಾರದ ಮಾದರಿ ವೇತನಕ್ಕಾಗಿ ಹೋರಾಟ ರೂಪಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಿ ಆಂಡ್ ಆರ್ ನಿಯಮಕ್ಕೆ ತಿದ್ದುಪಡಿ ತರುವಂತೆ ಆಗ್ರಹಿಸಿ, ನಡೆಸಲಾಗುವ ಹೋರಾಟವನ್ನು ಬೆಂಬಲಿಸುವುದು, ವೈದ್ಯಕೀಯ ವೆಚ್ಚ ಮರುಪಾವತಿ ಬಿಲ್ಗಳಿಗೆ ಶೀಘ್ರವೇ ಹಣ ಬಿಡುಗಡೆ ಮಾಡಿಸುವ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಿ.ಎಸ್.ಷಡಕ್ಷರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243