ದಿನದ ಸುದ್ದಿ
ನಾಡಿನಾದ್ಯಂತ ಕಾರ್ಮಿಕ ದಿನಾಚರಣೆ; ಹಲವೆಡೆ ವಿಶೇಷ ಕಾರ್ಯಕ್ರಮ
ಸುದ್ದಿದಿನ, ಬೆಂಗಳೂರು : ಇಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನಾಗಿ ಆಚರಿಸಲಾಯಿತು. ದುಡಿಯುವ ವರ್ಗದ ಪರಿಶ್ರಮವನ್ನು ಸ್ಮರಿಸುವುದು ಹಾಗೂ ಕಾರ್ಮಿಕರು, ಕಾರ್ಮಿಕ ಸಂಘಟನೆಗಳನ್ನು ಪ್ರೋತ್ಸಾಹಿಸಿ ಉತ್ತೇಜಿಸುವ ಸಲುವಾಗಿ ಪ್ರತಿ ವರ್ಷ ಮೇ 1 ರಂದು ಕಾರ್ಮಿಕರ ದಿನವನ್ನಾಗಿ ಆಚರಿಸಲಾಗುತ್ತದೆ.
ಕಾರ್ಮಿಕರಿಗೆ ಹಕ್ಕುಗಳು ದೊರೆತ ಹಿನ್ನೆಲೆಯಲ್ಲಿ ಮೇ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಧಾರವಾಡದ ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತರಾದ ಶ್ವೇತಾ ಸಂಗಮ ತಿಳಿಸಿದರು.
ಕಾರ್ಮಿಕ ದಿನಾಚರಣೆ ಅಂಗವಾಗಿ ಚಿತ್ರದುರ್ಗದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಆಯೋಜಿಸಿದ ಜಾಥಾದಲ್ಲಿ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಗದಗ ಜಿಲ್ಲೆ ರೋಣ ತಾಲೂಕಿನ ಇಟಗಿ ಗ್ರಾಮದಲ್ಲಿ ಮನ್ರೇಗಾ ಕಾರ್ಮಿಕರು ವಿಶ್ವ ಕಾರ್ಮಿಕ ದಿನಾಚರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ಜಾವೂರ, ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ಕಾರ್ಮಿಕ ಮತದಾರರಲ್ಲಿ ಮನವಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243