ಲೈಫ್ ಸ್ಟೈಲ್
ಕುಷ್ಠರೋಗ; ಕಡೆಗಣಿಸದಿರಿ
ಕೆಲವೊಂದು ರೋಗಗಳು ಮನುಷ್ಯನ ದೇಹ ಆಕ್ರಮಿಸಿಕೊಂಡ ನಂತರ ಅವನನ್ನು ಮಾನಸಿಕವಾಗಿ ಕುಗ್ಗಿಸುವುದುಂಟು, ಅದಕ್ಕೆ ಕಾರಣ ನಿರಂತರ ಸಾಮಾಜಿಕ ಅಪಮಾನಕ್ಕೊಳಗಾಗುವುದು. ಆ ರೀತಿಯ ರೋಗಗಳಲ್ಲಿ ಕುಷ್ಠರೋಗವೂ ಒಂದು. ಕುಷ್ಠರೋಗವೆಂದರೆ ಶುಚಿತ್ವವಿಲ್ಲದವನು, ದೇವರ ಶಾಪಕ್ಕೊಳಗಾದವನು ಎಂಬ ಅನೇಕ ರೀತಿಯ ಅಪಮಾನಗಳನ್ನು ಹೊರಿಸುವುದುಂಟು.
ಒಬ್ಬ ವ್ಯಕ್ತಿಗೆ ಕುಷ್ಠರೋಗವಿದೆಯೆಂದು ಆತ ನಂಬಿ ಅದನ್ನು ಸ್ವೀಕರಿಸುವುದರಲ್ಲೇ ಆ ರೋಗವು ಕೈಮೀರಿ ಹೋಗಿರುತ್ತದೆ. ಇದಕ್ಕೆಲ್ಲಾ ಕಾರಣ ಈ ರೋಗವು ಮೊದಮೊದಲು ದೇಹ ಆಕ್ರಮಿಸಿಕೊಂಡರೂ ನಮ್ಮ ನಿಜ ಜೀವನಕ್ಕೆ ಯಾವುದೇ ತೊಂದರೆ ನೀಡದು. ಆದರೆ ರೋಗಾಣುಗಳು ದೇಹದಲ್ಲಿ ಅತಿ ಹೆಚ್ಚು ಉತ್ಪತ್ತಿಯಾದಂತೆ ವ್ಯಕ್ತಿಯ ಚರ್ಮ, ನರ, ಕೈಕಾಲು ಹಾಗೂ ಕಣ್ಣುಗಳಿಗೆ ಹಾನಿಯುಂಟುಮಾಡುತ್ತವೆ. ಆಗ ಎಷ್ಟೇ ಪಕ್ವತೆಯಿಂದ ಚಿಕಿತ್ಸೆ ನೀಡಿದರೂ ಸಮರ್ಥವಾಗಿ ರೋಗ ಗುಣವಾಗಲೊಲ್ಲದು.
ಕುಷ್ಠರೋಗ ಅಥವಾ ಹ್ಯಾನ್ಸೆನ್ಸ್ ಖಾಯಿಲೆ ಎಂದು ಕರೆಯಲ್ಪಡುವ ಈ ಖಾಯಿಲೆ, ಮೈಕೋಬ್ಯಾಕ್ಟೀರಿಯಂ ಲೆಪ್ರೇ ಎಂಬ ಬ್ಯಾಕ್ಟೀರಿಯಾ ದಿಂದ ಬರುತ್ತದೆ.
ರೋಗ ಹರಡುವಿಕೆ
• ಒಬ್ಬ ಕುಷ್ಠರೋಗಕ್ಕೊಳಪಟ್ಟ ವ್ಯಕ್ತಿಯ ಸ್ಪರ್ಷದಿಂದ, ಮೂಗು ಮತ್ತು ಬಾಯಿಯಿಂದ ಬರುವ ಲೋಳೆದ್ರವದ ಸಂಪರ್ಕದಿಂದ, ಈ ರೋಗ ಇನ್ನೊಬ್ಬ ಆರೋಗ್ಯವಂತ ವ್ಯಕ್ತಿಗೆ ಹರಡಬಹುದು.
• ಈ ರೋಗ ಎಲ್ಲಾ ವಯಸ್ಸಿನವರಿಗೂ ಹರಡಬಲ್ಲದು.
• ವ್ಯಕ್ತಿಯ ರೋಗನಿರೋಧಕ ಶಕ್ತಿ ಕಡಿಮೆ ಮಾಡುವ (ಹೆಚ್.ಐ.ವಿ.ಯಂಥ) ಯಾವುದೇ ಖಾಯಿಲೆಯು, ಕುಡಿಯುವ ನೀರಿನ ಕಲುಷಿತವಾಗಿರುವವರು, ಮಲಗುವ ಹಾಸಿಗೆ ಶುಚಿತ್ವವಿಲ್ಲದವರು, ಪೌಷ್ಟಿಕವಲ್ಲದ ಆಹಾರ ಸೇವಿಸುವವರು ಈ ಖಾಯಿಲೆಗೆ ಹೆಚ್ಚು ಆಸ್ಪದಕ್ಕೊಳಗಾಗಬಹುದು.
ರೋಗದ ಲಕ್ಷಣಗಳು
ಇದರಲ್ಲಿ ಪ್ರಾಥಮಿಕ ಹಂತದ ರೋಗದಲ್ಲಿ ಚರ್ಮದ ಮೇಲೆ ಅರಿವಳಿಕೆ ತೇಪೆಗಳು ಅಂದರೆ, ಸ್ಪರ್ಷಜ್ಞಾನವಿಲ್ಲದ ಕೆಂಪು ಅಥವಾ ಕಂದು ಬಣ್ಣದ ತೇಪೆಗಳು ಮೂಡುತ್ತವೆ.
ಕುಷ್ಠರೋಗವನ್ನು ತನ್ನ ಗುಣ ಲಕ್ಷಣಗಳಲ್ಲಿ ನೋಡುವುದಾದರೆ ಎರಡು ಪ್ರಮುಖ ವಿಧಗಳಲ್ಲಿ ವಿಂಗಡಿಸಬಹುದು
1)Paucibacillary leprosy: ಇದರಲ್ಲಿ ಚರ್ಮದ ಮೇಲೆ 1 ರಿಂದ 5 ಅರಿವಳಿಕೆ ತೇಪೆಗಳನ್ನು ಉಂಟಾಗುತ್ತವೆ ಮತ್ತು/ಅಥವಾ ಕೇವಲ ಒಂದು ನರ ತನ್ನ ಶಕ್ತಿಯನ್ನು ಕಳೆದುಕೊಂಡಿರುತ್ತದೆ.
2)Multibacillary leprosy: ಇದರಲ್ಲಿ ಚರ್ಮದ ಮೇಲೆ 5ಕ್ಕಿಂತ ಹೆಚ್ಚು ಅರಿವಳಿಕೆ ತೇಪೆಗಳನ್ನು ಉಂಟಾಗುತ್ತವೆ ಮತ್ತು/ಅಥವಾ ಒಂದಕ್ಕಿಂತ ಹೆಚ್ಚು ನರಗಳು ತನ್ನ ಶಕ್ತಿಯನ್ನು ಕಳೆದುಕೊಂಡಿರುತ್ತವೆ.
ಆದರೆ ರೋಗದ ಇನ್ನೂ ಹೆಚ್ಚಿನ ಅಧ್ಯಯನ ಮತ್ತು ಚಿಕಿತ್ಸೆಯ ದೃಷ್ಟಿಯಿಂದ ಭಾರತೀಯ(5 ಪ್ರಕಾರಗಳು) ಮತ್ತು ಮ್ಯಾಡ್ರಿಡ್ (4 ಪ್ರಕಾರಗಳು) ಎಂದು ಮತ್ತೆ ವಿಂಗಡಿಸಲಾಗುತ್ತದೆ.
ರೋಗವು ಸುದೀರ್ಘ ಕಾಲ ಚಿಕಿತ್ಸೆ ಪಡೆಯದೇ ಇದ್ದಲ್ಲಿ ಮುಂದೆ ಕೈಕಾಲುಗಳು ಸ್ವಾಧೀನ ಕಳೆದುಕೊಳ್ಳುತ್ತವೆ,
ಕಣ್ಣುಗಳೊಳಗಿರುವ ನರವೂ ರೋಗಕ್ಕೊಳಪಟ್ಟು ದೃಷ್ಟಿ ಕುರುಡು ಸಂಭವಿಸಬಹುದು.
ಆದರೆ ಕೆಲವೊಮ್ಮೆ ಚರ್ಮವು ಯಾವುದೇ ಹಾನಿಗೊಳಗೊಳ್ಳದೇ ಒಳಗಿನ ನರವ್ಯೂಹವು ಕುಷ್ಠಕ್ಕೊಳಗಾಗಬಹುದು.
ರೋಗ ಪರೀಕ್ಷೆಗಳು
• ಲೆಪ್ರೊಮಿನ್ ಪರೀಕ್ಷೆ: ರೋಗಿಯು ರೋಗದ ಯಾವ ಹಂತದಲ್ಲಿದ್ದಾನೆ ಮತ್ತು ರೋಗವು ಎಷ್ಟರ ಮಟ್ಟಿಗೆ ಶಮನವಾಗುತ್ತದೆ ಎಂದು ತಿಳಿದುಕೊಳ್ಳಲು
• ಎಲಿಸಾ
• ರೇಡಿಯೋ ಇಮ್ಮ್ಯೂನೋ ಅಸ್ಸೇ
ಸೇರಿದಂತೆ ಇನ್ನು ಕೆಲವು ಪರೀಕ್ಷೆಗಳಿಂದ ಕುಷ್ಟರೋಗವನ್ನು ನಿರ್ಣಯ ಮಾಡಬಹುದಾಗಿದೆ.
ಚಿಕಿತ್ಸೆ
1) ಪಾಸಿಬ್ಯಾಸಿಲ್ಲರಿ ಲೆಪ್ರೊಸಿ: ರಿಫಾಂಪಿಸಿನ್ (ತಿಂಗಳಿಗೊಮ್ಮೆ ವೈದ್ಯಕೀಯ ಪರಿವೀಕ್ಷಣೆಯಲ್ಲಿ) ಮತ್ತು ಡ್ಯಾಪ್ಸೋನ್ ಪ್ರತಿದಿನದಂತೆ ಈ ಮಾತ್ರೆಗಳನ್ನು 6 ತಿಂಗಳ ಕಾಲ ಸೇವಿಸಬೇಕಾಗುತ್ತದೆ.
2) ಮಲ್ಟಿಬ್ಯಾಸಿಲ್ಲರಿ ಲೆಪ್ರೊಸಿ: ರಿಫಾಂಪಿಸಿನ್ (ತಿಂಗಳಿಗೊಮ್ಮೆ ವೈದ್ಯಕೀಯ ಪರಿವೀಕ್ಷಣೆಯಲ್ಲಿ) ಮತ್ತು ಡ್ಯಾಪ್ಸೋನ್ ಪ್ರತಿದಿನದಂತೆ ಜೊತೆಗೆ ಕ್ಲೊಫಾಝಿಮಿನ್ ತಿಂಗಳಿಗೊಮ್ಮೆ ವೈದ್ಯಕೀಯ ಪರಿವೀಕ್ಷಣೆಯಲ್ಲಿ ಹಾಗೂ ಇದೇ ಮಾತ್ರೆಯನ್ನು ಪ್ರತಿದಿನದಂತೆಯೂ ಒಟ್ಟು 12 ತಿಂಗಳ ಕಾಲ ಸೇವಿಸಬೇಕಾಗುತ್ತದೆ.
ಈ ಚಿಕಿತ್ಸೆಗೆ Multi Drug Therapy ಎಂದು ಕರೆಯಲಾಗುತ್ತದೆ. ಈ ಮಾತ್ರೆಗಳು ಕುಷ್ಠರೋಗ ನಿರ್ಣಯಗೊಂಡ ಯಾವುದೇ ರೋಗಿಗೆ ಅಲ್ಲಿನ ವ್ಯಾಪ್ತಿಗೊಳಪಡುವ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಭ್ಯವಿರುತ್ತದೆ.
ರೋಗ ತಡೆಗಟ್ಟುವಿಕೆ
• ಮಗು ಹುಟ್ಟಿದಾಗ ಕೊಡುವ ‘ಬಿಸಿಜಿ’ ಚುಚ್ಚುಮದ್ದು ಕುಷ್ಠರೋಗದಿಂದ ಶೇ.20 ರಿಂದ 40ರಷ್ಟು ಸಂರಕ್ಷಣೆಯನ್ನು ನೀಡುತ್ತದೆ.
• ಯಾವುದೇ ಕುಷ್ಠರೋಗಿಯ ಸಂಪರ್ಕವುಂಟಾದಲ್ಲಿ, ತಕ್ಷಣವೇ ವೈದ್ಯರ ಸಮಾಲೋಚನೆ ಪಡೆದು ಚಿಕಿತ್ಸೆ ಪಡೆಯುವುದು.
• ಮೇಲೆ ತಿಳಿಸಿರುವ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ, ವೈದ್ಯರ ಸಲಹೆ ಪಡೆದು, ಅವಶ್ಯಕತೆಯಿದ್ದರೆ ರೋಗ ಪರೀಕ್ಷೆಗಳನ್ನೂ ಮಾಡಿಸಿ ಚಿಕಿತ್ಸೆ ಪಡೆಯುವುದು ಸೂಕ್ತ.
• ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಯ ಎಲ್ಲಾ ಅಂಶಗಳನ್ನೂ ಅನುಸರಿಸುವುದು.
– ಡಾ. ಸಂತೋಷ್ ಕೆ.ಬಿ

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243




