ಭಾವ ಭೈರಾಗಿ
ಭರವಸೆಯಿಲ್ಲದ ಜೀವನ..!?

ಒಂದು ಅಂದಾಜಿನಂತೆ ಹಿಂದಿನ ಕಾಲದಲ್ಲಿ ಮನುಷ್ಯನ ಆಯಸ್ಸು ಸರಾಸರಿ ನೂರು ವರ್ಷ ಇತ್ತು. ಅದು ಕ್ರಮೇಣ ಎಂಬತ್ತು ವರ್ಷವಾಗಿ, ಈಗ ಸುಮಾರು ಅರವತ್ತೈದು ವರ್ಷ ಎಂದು ಅಂದಾಜಿಸಿರುತ್ತಾರೆ. ಇದಕ್ಕೆ ಕಾರಣ ಏನು ಎಂದು ನೋಡಿದರೆ, ಈಗಿನ ಕಾಲದಲ್ಲಿನ ಆಹಾರ ಪದ್ದತಿ, ಒತ್ತಡದ ಯಾಂತ್ರಿಕ ಜೀವನ, ಕಂಡು ಕೇಳರಿಯದ ಖಾಯಿಲೆಗಳು, ಅನಿರೀಕ್ಷಿತ ಸಾವುಗಳು ಹೀಗೆ ಹಲವಾರು ಕಾರಣಗಳಿಂದ ಮನುಷ್ಯನ ಆಯಸ್ಸು ಇಷ್ಟೇ ಎಂದು ಹೇಳಲು ಬರುವುದಿಲ್ಲ, ಮನುಷ್ಯ ಬರುಬರುತ್ತಾ ಅಲ್ಪಾಯುಷ್ಯ ಜೀವಿಯಾಗುತ್ತಾ ಬಂದಿದ್ದಾನೆ ಎಂದರೆ ಅತಿಶಯೋಕ್ತಿಯಲ್ಲ.
ಮೊದಲಿಗೆ ಆಹಾರ ಪದ್ದತಿಗೆ ಬರುವುದಾದರೆ, ಹಿಂದಿನ ಕಾಲದಲ್ಲಿ ಹಿರಿಯರು ಮಾಡುತ್ತಿದ್ದ ವಿಧ ವಿಧವಾದ ಅಡುಗೆಗಳಲ್ಲಿ ಬೇಳೆ ಕಾಳುಗಳು, ಸೊಪ್ಪು, ವಿಟಮಿನ್ ಭರಿತ ಆಹಾರಗಳಿರುತ್ತಿದ್ದವು. ರಾಗಿ ರೊಟ್ಟಿ, ಮುದ್ದೆ, ಇದಕ್ಕೆ ತಕ್ಕಂತೆ ಹಸುವಿನ ತುಪ್ಪ, ವಿಧ ವಿಧವಾದ ತರಕಾರಿಗಳ ಪಲ್ಯಗಳು ಹೀಗೆ ಅನೇಕ ರೀತಿಯ ಆಹಾರವನ್ನು ತಯಾರಿಸಿ ತಿನ್ನುತ್ತಿದ್ದರು, ಅದರಂತೆ ಕೆಲಸವನ್ನು ಸಹ ಮಾಡುತ್ತಿದ್ದರು. ಇದಕ್ಕೆ ಒಂದು ಗಾದೆ ಇದೆ” ಹಿಟ್ಟಂ ತಿಂದಂ ಬೆಟ್ಟಂ ಕಿತ್ತಿಟ್ಟಂ” ಎಂದು ಅಂದರೆ ಮುದ್ದೆ ತಿಂದರೆ ಬೆಟ್ಟವನ್ನೂ ಸಹ ಕಿತ್ತಿಡಬಹುದಾದ ಶಕ್ತಿ ಬರುತ್ತದೆ ಎಂದು ನಮ್ಮ ಹಿರಿಯರು ಹೇಳುತ್ತಿದ್ದರು. ಅವರಿಗೆ ಅಷ್ಟಾಗಿ ಯಾವ ಖಾಯಿಲೆಯೂ ಬರುತ್ತಿರಲಿಲ್ಲ. ಬಂದರೂ ಇವರ ದೇಹದಲ್ಲಿದ್ದ ರೋಗ ನಿರೋಧಕ ಶಕ್ತಿ ಇವರನ್ನು ರಕ್ಷಿಸುತ್ತಿತ್ತು. ಇದರಿಂದ ಹಿಂದಿನವರು ಹೆಚ್ಚಿನ ಕಾಲ ಬದುಕಲು ನೆರವಾಗುತ್ತಿತ್ತು. ಆದರೆ ಈಗಿನ ಕಾಲದಲ್ಲಿ ಆಹಾರ ಪದ್ದತಿಯೇ ಬೇರೆಯಾಗಿದೆ ಅದರಲ್ಲೂ ಆಹಾರ ತಿನ್ನುವುದೂ ಸಹ ಸಾಕಷ್ಟು ಬದಲಾಗಿದೆ. ಈಗಿನ ಕಾಲದಲ್ಲಿ ಕೆಲವು ಸತ್ವವಿಲ್ಲದ ಆಹಾರದಲ್ಲಿ ಹೊಟ್ಟೆ ಮಾತ್ರ ತುಂಬುತ್ತದೆ. ನಮ್ಮ ಶರೀರಕ್ಕೆ ಬೇಕಾದ ವಿಟಮಿನ್ಗಳು ಸಿಗುವುದೇ ಇಲ್ಲ. ಎಲ್ಲವೂ ಆಧುನಿಕ ವೈಜ್ಞಾನಿಕ ಪದ್ದತಿಯಿಂದ ತಯಾರಾದ ಪದಾರ್ಥಗಳು, ತರಕಾರಿ, ಹಣ್ಣುಗಳು, ಬೆಳೆ ಜಾಸ್ತಿ ಬರಲಿ ಎಂದು ಆಧುನಿಕ ವೈಜ್ಞಾನಿಕ ಪದ್ದತಿಯಂತೆ ವ್ಯವಸಾಯ ಮಾಡುವುದು ಅನಿವಾರ್ಯವಾಗಿದೆ. ಏಕೆಂದರೆ ಬೆಳೆಯುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಬೆಳೆಯನ್ನು ಬೆಳೆಯಬೇಕಾಗಿರುವುದರಿಂದ, ಆಧುನಿಕ ವ್ಯವಸಾಯ ಒಂದು ವರವೆಂದೇ ಹೇಳಬಹುದು. ಆದರೆ ಒಂದು ಕೊಟ್ಟು ಇನ್ನೊಂದನ್ನು ಕಿತ್ತುಕೊಳ್ಳುವಂತೆ, ಆಹಾರವೇನೋ ಹೆಚ್ಚಿಗೆ ಬೆಳೆಯಬಹುದು ಆದರೆ ಅದರಲ್ಲಿ ಸತ್ವಾಂಶದ ಕೊರತೆ ಇರುವುದು ಎದ್ದು ಕಾಣುತ್ತದೆ.
ಆಹಾರದಲ್ಲೇ ಸತ್ವವಿಲ್ಲವೆಂಬುದು ಒಂದಾದರೆ ಅದನ್ನು ತಿನ್ನುವುದೇ ಬೇರೆ ರೀತಿಯದು. ಬೇಗ ಎದ್ದು ಕೆಲಸಕ್ಕೆ ಹೋಗುವವರು, ಮನೆಯಲ್ಲಿ ಬೆಳಗ್ಗೆ ಎಷ್ಟು ತಾನೇ ತಿನ್ನಲು ಸಾಧ್ಯ? ಆಫೀಸಿಗೆ ವೇಳೆ ಆಯಿತೆಂದು ಕೆಲವರು, ಬಸ್ಸು ಸಿಗುತ್ತದೋ ಇಲ್ಲವೋ ಎಂದು ಕೆಲವರು, ಸ್ವಂತ ವಾಹನ ಇದ್ದಲ್ಲಿ, ಹೋಗಬಹುದಾದರೂ ಟ್ರಾಫಿಕ್ ಕಿರಿ ಕಿರಿಯಿಂದ ತಪ್ಪಿಸಿಕೊಳ್ಳಲು ಬೇಗನೇ ಹೊರಡಲೇ ಬೇಕು, ಮಾಡಿರುವ ಅಡುಗೆಯಲ್ಲಿ ಅಲ್ಪ ಸ್ವಲ್ಪ ತಿಂದು ಅದನ್ನೇ ಮದ್ಯಾಹ್ನದ ಊಟಕ್ಕೆಂದು ಡಬ್ಬಿಗೆ ಸ್ವಲ್ಪ ಹಾಕಿಕೊಂಡು ಹೋಗಬೇಕಾದ ಪರಿಸ್ಥಿತಿ, ಅಷ್ಟು ಬೇಗನೆ ಎಲ್ಲಾ ಅಡುಗೆಯನ್ನು ಮಾಡಲು ಸಾಧ್ಯವೇ? ಏನು ಆಗಿರುವುದೋ ಅದನ್ನೇ ತಿಂದು ಅದನ್ನೇ ತೆಗೆದುಕೊಂಡು ಹೋಗುವುದು ರೂಢಿಯಾಗಿದೆ. ಇನ್ನು ರಜೆ ಬಂದರೆ, ಇನ್ನೊಂದು ರೀತಿಯಂತೆ ನಡೆವಳಿಕೆ ಇದೆ. ದಿನವೂ ಮನೆಯಲ್ಲಿ ಅಡುಗೆ ಮಾಡಿ, ಸಾಕಾಗಿ ಹೋಗಿದೆ, ವಾರಕ್ಕೊಮ್ಮೆಯಾದರೂ ಮನೆಯಲ್ಲಿ ಅಡುಗೆ ಮಾಡದೆ ಹೋಟೆಲ್ಲಿಗೆ ಹೋಗೋಣ ಎಂದು ತೀರ್ಮಾನಿಸುವವರೂ ಎಷ್ಟೋ ಮಂದಿ ಇದ್ದಾರೆ. ಇದರಿಂದ ದೇಹಕ್ಕೆ ಬೇಕಾಗುವಷ್ಟು ವಿಟಮಿನ್ಗಳು, ಸಿಗುವುದೇ ಇಲ್ಲ. ಇದರಿಂದ ರೋಗ ನಿರೋಧಕ ಶಕ್ತಿ ಬರುವುದಾದರೂ ಹೇಗೆ? ಇದರಿಂದ ಅನೇಕ ರೀತಿಯ ಖಾಯಿಲೆಗಳು ಬಂದು ಆಯಸ್ಸು ಮುಗಿಯುವ ಮುನ್ನ ಜೀವನ ಯಾತ್ರೆ ಮುಗಿಸುವವರು ಎಷ್ಟೋ ಮಂದಿ ಇದ್ದಾರೆ. ಇದರ ಜೊತೆಗೆ ಈಗಿನ ಕಾಲದಲ್ಲಿ ಮಕ್ಕಳು ಜಂಕ್ ಆಹಾರ ತಿಂದು ಸರಿಯಾಗಿ ಊಟ ಮಾಡುವುದೇ ಇಲ್ಲ. ಇದರಿಂದ ರೋಗ ನಿರೋಧಕ ಶಕ್ತಿ ಎಲ್ಲಿಂದ ಬರಬೇಕು? ಇದರ ಜೊತೆಗೆ ಕೆಲವರು ಮದ್ಯಪಾನ ತಂಬಾಕು ಸೇವನೆ ಇತ್ಯಾದಿಗಳ ದುಷ್ಚಟದಿಂದ ನೋಡುವುದಕ್ಕೆ ಮನುಷ್ಯನಾಗಿರುತ್ತಾನಷ್ಟೇ ಆದರೆ ಆರೋಗ್ಯವಂತನಾದ ಮನುಷ್ಯನು ಆಗಿರುವುದಿಲ್ಲ. ಮರದ ಒಳಗೆಲ್ಲಾ ಗೆದ್ದಲು ಹಿಡಿದು, ಮೇಲ್ನೋಟಕ್ಕೆ ಮರವು ಮಾತ್ರ ಬಹಳ ಚೆನ್ನಾಗಿ ಕಾಣುತ್ತಿರುತ್ತದೆ. ಆದರೆ ಗೆದ್ದಲು ಹಿಡಿದು ಯಾರಿಗೂ ತಿಳಿಯವುದಿಲ್ಲ. ಆ ಮರವು ಯಾವಾಗ ಬೇಕಾದರೂ ಬೀಳಬಹುದು. ನೋಡಿದವರು ಮರ ಎಷ್ಟು ಚೆನ್ನಾಗಿತ್ತು ಸ್ವಲ್ಪ ಜೋರಾಗಿ ಗಾಳಿ ಬೀಸಿದ್ದಕ್ಕೆ ಬಿದ್ದು ಹೋಯಿತು ಎನ್ನುತ್ತಾರೆ. ಮನುಷ್ಯನ ದೇಹದ ಸ್ಥಿತಿಯೂ ಇದೇ ರೀತಿ ಆಗಿದೆ. ಮನುಷ್ಯ ಹೊರಗೆ ನೋಡಲು ಬಹಳ ಚೆನ್ನಾಗಿರುತ್ತಾನೆ ಆದರೆ ಇವನ ದೇಹದೊಳಗೆ ಇರುವ ಖಾಯಿಲೆಗಳು ಗೊತ್ತಾಗುವುದೇ ಇಲ್ಲ. ಇದರಿಂದ ಒಂದು ಸಣ್ಣ ಖಾಯಿಲೆ ಬಂದರೂ ಮನುಷ್ಯ ಯಾವಾಗ ಬೇಕಾದರೂ ಸಾಯಬಹುದು. ನೋಡಿದವರಿಗೆ ಎಷ್ಟು ಚೆನ್ನಾಗಿದ್ದ ಒಂದು ಸಣ್ಣ ಜ್ವರ ಬಂದಿದ್ದಕ್ಕೆ ಸತ್ತು ಹೋದನಲ್ಲಾ ಎಂದು ಹೇಳುವ ಪ್ರಸಂಗಗಳು ಉಂಟು. ಒಳಗಿನ ಖಾಯಿಲೆ ಯಾರಿಗೂ ತಿಳಿಯವುದಿಲ್ಲ. ಗೆದ್ದಿಲು ಮರದ ಒಳಗೆ ತಿನ್ನುವ ರೀತಿ ಮನುಷ್ಯನ ದೇಹದ ಒಳಗೆ ಖಾಯಿಲೆ ಬಂದು ಯಾವಾಗ ಬೇಕಾದರೂ ಸಾಯಬಹುದು. ಕಟ್ಟು ನಿಟ್ಟಿನ ಆಹಾರ ಪದ್ದತಿ ಅನುಸರಿಸಿದರೆ ಹಾಗೂ ದುಷ್ಚಟಗಳಿಂದ ದೂರ ಇದ್ದರೆ ಮಾತ್ರ ಇದಕ್ಕೆಲ್ಲಾ ಪರಿಹಾರ ಸಿಗಬಹುದು.
ಒತ್ತಡದ ಯಾಂತ್ರಿಕ ಜೀವನದಿಂದ ಮನುಷ್ಯನು ಅರ್ಧ ಆಯಸ್ಸಿಗೆ ಹೊರಟು ಹೋಗುತ್ತಾನೆ. ಯಾವಾಗಲೂ ಟೆನ್ಷನ್ ಆದರೆ, ದೇಹಕ್ಕೆ ಆರಾಮ ಸಿಗುವುದಾದರೂ ಎಲ್ಲಿ? ಬೆಳಿಗ್ಗೆ ಬೇಗ ಹೋಗಬೇಕೆಂಬ ಆತುರ, ಕಛೇರಿಯಲ್ಲಿ ಕೆಲಸ ಆಗಲಿಲ್ಲವೆಂಬ ದುಗುಡ, ಕೆಲವು ಕಡೆ ನೀಡಿರುವ ನಿರ್ದಿಷ್ಟ ಕೆಲಸವನ್ನು ಪೂರ್ಣಗೊಳಿಸಬೇಕೆಂಬ ಷರತ್ತು, ಇದರಿಂದ ಒತ್ತಡಗಳು ಉಂಟಾಗಿ ಅನೇಕ ಖಾಯಿಲೆಗಳು ಬಂದು ಅರ್ಧ ಆಯಸ್ಸಿಗೆ ಹೋಗಲು ಕಾರಣವಾಗುತ್ತದೆ. ಕಂಡು ಕೇಳರಿಯದ ಖಾಯಿಲೆಗಳು, ಕೆಲವು ಖಾಯಿಲೆಗಳು ನಮ್ಮ ಆಹಾರ ಪದ್ದತಿಯಿಂದ ಬಂದರೆ, ಇನ್ನೂ ಕೆಲವು ಖಾಯಿಲೆಗಳು ಹೊರಗಿನ ಕೀಟಗಳು ಸೊಳ್ಳೆಗಳಿಂದ ಬರುತ್ತವೆ. ಇಲ್ಲಿವರೆವಿಗೂ ಕಂಡು ಕೇಳರಿಯದ ಭಯಂಕರ ಖಾಯಿಲೆಗಳು, ಡೆಂಗ್ಯೂ, ಹಕ್ಕಿಜ್ವರ, ಹೆಚ್.1 ಎನ್ 1 ಹಂದಿ ಜ್ವರ ಹೀಗೆ ಅನೇಕ ರೀತಿಯ ಖಾಯಿಲೆಗಳಿಗೆ ಮನುಷ್ಯನು ತುತ್ತಾಗುತ್ತಿದಾನೆ. ವೈಜ್ಞಾನಿಕವಾಗಿ ಔಷದಿಗಳನ್ನು ಎಷ್ಟೇ ಕಂಡು ಹಿಡಿದರೂ ಅದಕ್ಕೆ ತಕ್ಕಂತೆ ಮಾನವನಿಗೆ ಸವಾಲಾದಂತೆ ಅನೇಕ ಖಾಯಿಲೆಗಳು ಹೊಸದಾಗಿ ಹುಟ್ಟಿಕೊಂಡಿವೆ. ಇದರಿಂದ ಮನುಷ್ಯ ಕೃಷನಾಗಿ, ಆಯಸ್ಸು ಮುಗಿಯುವ ಮೊದಲೇ ಹೊರಟು ಹೋಗುವ ಅಪಾಯ ಎದುರಾಗುತ್ತಿದೆ.
ನಗರಗಳ ಜೀವನಕ್ಕೆ ಬಂದರೆ, ಅತಿಯಾದ ವಾಹನಗಳು, ವಾಹನಗಳು ಉಗಳುವ ಹೊಗೆಯಿಂದ ಬರುವ ಖಾಯಿಲೆಗಳು, ಇದರಿಂದಲೂ ಮನುಷ್ಯನ ಆಯಸ್ಸು ಕಡಿಮೆಯಾದಂತೆ ಆಗಿದೆ. ಇನ್ನು ವಾಹನಗಳಲ್ಲಿ ಪ್ರಯಾಣ ಮಾಡುವುದು ಒಬ್ಬರು ತನ್ನ ಪಾಡಿಗೆ ಸರಿಯಾಗಿ ಹೋಗುತ್ತಿದ್ದರೂ ಸಹ ಬೇರೆಯವರು ಬಂದು ಅಪಘಾತ ಮಾಡುವುದು. ಇದರಿಂದ ಆರೋಗ್ಯವಾಗಿದ್ದರೂ ಬೇಗನೇ ಮೃತರಾಗುತ್ತಾರೆ. ವಾಹನ ಅಪಘಾತಗಳಿಂದಲೂ ಎಷ್ಟೋ ಜನರ ಜೀವವೇ ಹೋಗಿದೆ. ಹೋಗುತ್ತಲೂ ಇದೆ. ಇದರ ಜೊತೆಗೆ ತಮ್ಮದೇ ಆದ ನಿರ್ಲಕ್ಷತನ ಅತಿವೇಗವಾಗಿ ಹೋಗಬೇಕೆನ್ನುವ ಕೆಟ್ಟ ಗುಣ. ಸ್ವಲ್ಪ ತಾಳ್ಮೆಯಿಂದ ನಿಧಾನವಾಗಿ ಹೋದರೆ ಸುರಕ್ಷಿತವಾಗಿ ಮನೆಯನ್ನು ತಲುಪಬಹುದು. ವಾಹನಗಳಿಂದ ಸ್ವಲ್ಪ ಅಜಾಕರೂಕರಾದರೂ ಅಪಾಯ ಕಟ್ಟಿಟ್ಟ ಬುತ್ತಿ.
ಇದರ ಜೊತೆಗೆ ಜೀವನದಲ್ಲಿ ನಿರಾಸೆಯಾದರೆ, ಪ್ರೇಮ ವೈಫಲ್ಯವಾದರೆ, ಪರೀಕ್ಷೆಗಳಲ್ಲಿ ಅನುತ್ತೀರ್ಣರಾದರೆ, ಅಥವಾ ಜೀವನದಲ್ಲಿ ತಮ್ಮದೇ ಆದ ಸಮಸ್ಯೆ, ಹಣಕಾಸಿನ ಸಮಸ್ಯೆ ಇದರಿಂದ ತಮ್ಮ ಜೀವವನ್ನು ತಾವೇ ತೆಗೆದುಕೊಳ್ಳಲು ಆತ್ಮಹತ್ಯೆಯಂತ ಮಾರ್ಗಕ್ಕೆ ಮೊರೆಹೋಗುವುದು. ಮನುಷ್ಯನ ಜೀವ ಅತ್ಯಮೂಲ್ಯವಾದದ್ದು, ಇದನ್ನು ಹಾಳುಮಾಡಿಕೊಳ್ಳಬಾರದೆಂಬುದನ್ನು ಮರೆತು ಎದುರಿಸಲು ಧೈರ್ಯವಿಲ್ಲದೆ ಅಥವಾ ಬೆಂಬಲಿಗರು ಇಲ್ಲದೆ, ತಮ್ಮ ಪ್ರಾಣವನ್ನು ತಾವೇ ತೆಗೆದುಕೊಳ್ಳುವವರು ಉಂಟು. ಇದರ ಜೊತೆಗೆ ದ್ವೇಷಕ್ಕಾಗಿ, ಆಸ್ತಿಗಾಗಿ, ಬೇರೆ ರೀತಿಯ ಸಣ್ಣ ಸಣ್ಣ ಕಾರಣಗಳಿಗೆ ಬೇರೆಯವರ ಜೀವದ ಬೆಲೆಯನ್ನೇ ಅರ್ಥ ಮಾಡಿಕೊಳ್ಳದೆ ಜೀವವನ್ನು ತೆಗೆಯುವುದು. ಪ್ರಕೃತಿ ವಿಕೋಪಗಳಿಂದಲೂ ಎಷ್ಟೋ ಜನರ ಆಯುಷ್ಯ ಅರ್ಧದಲ್ಲೇ ಮುಗಿಯುತ್ತದೆ. ಚಂಡಮಾರುತ, ಭೂಕಂಪ, ಮಳೆ ಸಿಡಿಲು ಇನ್ನೂ ಹೀಗೆ ಅನೇಕ ಪೃಕೃತಿ ವಿಕೋಪದಿಂದ ಮನುಷ್ಯನ ಜೀವವು ಹೋಗುವ ಸಂಭವ ಉಂಟು. ಪ್ರಕೃತಿ ವಿಕೋಪ ಯಾವಾಗ ಬೇಕಾದರೂ ಸಂಭವಿಸಬಹುದು. ಇದಕ್ಕೆ ಕಾಲ ವೇಳೆ ಯಾವುದೂ ಇಲ್ಲ. ಇದಕ್ಕೆಲ್ಲಾ ಹವಾಮಾನ ವೈಪರೀತ್ಯ. ಮನುಷ್ಯನ ದುಡುಕು ನಿರ್ಧಾರ, ಜೀವನ ನಡವಳಿಕೆ ಆಹಾರ ಸೇವನೆ, ದುಷ್ಚಟಗಳು ಇತ್ಯಾದಿಗಳೇ ಕಾರಣವಾಗಿದೆ. ತನ್ನ ಸ್ವಾರ್ಥಕ್ಕಾಗಿ ಕಾಡುಗಳಲ್ಲಿರುವ ಮರಗಳನ್ನು ಕಡಿದು, ಹಸಿರು ಕಾಡನ್ನು ಕಾಂಕ್ರೀಟ್ ಕಾಡು ಮಾಡಿದರೆ ಹವಾಮಾನ ಅಸಮತೋಲನ ಉಂಟಾಗಿ ಪ್ರಕೃತಿ ವಿಕೋಪಕ್ಕೆ ತಿರುಗಿ ಮನುಷ್ಯನ ಜೀವವನ್ನೇ ಬಲಿ ಪಡೆಯುತ್ತಿರುವ ಸನ್ನಿವೇಶಗಳು ಉಂಟಾಗುತ್ತಿದ್ದು ಪ್ರಳಯದ ಭೀತಿ ಅವರಿಸಿದೆ.
–ಎನ್.ಮುರಳೀಧರ್
ಕಾವ್ಯನಾಮ : ಮುರಳಿಮಂಗಲಧರೆ
ನೆಲಮಂಗಲ
9902772278

ದಿನದ ಸುದ್ದಿ
ಕವಿತೆ | ನಾನೊಲಿದೆನಯ್ಯಾ

- ರಮ್ಯ ಕೆ ಜಿ, ಮೂರ್ನಾಡು
ಅಲೆಯುತ್ತಿದೆ ಈ ರೂಹು
ನನ್ನೊಳಗಿಂದ ಚಿಗಿದು
ನಿನ್ನ ತುದಿಬೆರಳಲಿ ಕುಣಿದು
ಗಾಳಿತುಟಿಯ ಸೋಕಿದಾಕ್ಷಣ
ಬೆವೆತು,
ಮಳೆ ಹೊಯ್ಯಿಸಿ
ಮಣ್ಣ ಘಮದೊಳಗೆ
ಲೀನವಾಗುವಂತೆ.
ಹೊಳೆಯುತ್ತದೆ ನಿನ್ನ
ಕಣ್ಣಬೊಂಬೆಯೊಳಗೆ,
ಎಷ್ಟೋ ನೋವು ಕುಡಿದ
ನದಿಯೆದೆಯೊಳಗೆ,
ನೆನಪ ಮೀಟುವ ಘಳಿಗೆಗೆಲ್ಲ
ಪಾರಿಜಾತದ ಪರಿಮಳವುಳಿವಂತೆ.
ಕಲೆಯುತ್ತದೆ ಮತ್ತೆ,
ನಿನ್ನ ಮಾತು ಜೀವವಾಗುವಂತೆ
ನಗೆಬೆಳಕು ಕೈಹಿಡಿದು
ಜೊತೆ ನಡೆಯುವಂತೆ
ಅನಂತ ಬಾನು-
ಪ್ರೇಮಗಡಲಿಗೆ ಬಾಗುವಂತೆ
ತಿರುವುಗಳಲಿ ಹೊರಳಿ,
ಕವಲಾಗುವಾಗ
ಹಾಡೊಂದು ಕಾಡುವಂತೆ
ಜಪಮಣಿ ಎಣಿಸುವ
ಬೆರಳು, ಲೆಕ್ಕ ಮರೆತು
ಉಸಿರ ಪಲುಕನು
ಚಿತ್ರವಾಗಿಸುವಂತೆ.
ಕವಿತೆ : ರಮ್ಯ ಕೆ ಜಿ, ಮೂರ್ನಾಡು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮುರುಕುಂಬಿ

- ಡಾ.ಗಿರೀಶ್ ಮೂಗ್ತಿಹಳ್ಳಿ
ನಮ್ಮ ಒಳಗೆ ಬಿಡಲೆ ಇಲ್ಲ
ಚೌರ ಚಹಾ ಮಾಡಲೆ ಇಲ್ಲ
ಎದೆಗೆ ಒದ್ದರು; ಬದಿ ಬದಿಗು ನಕ್ಕರು
ಜಾತಿಪಂಚೆ ಉಟ್ಟುಕೊಂಡು
ನೀತಿನಂಜು ಇಟ್ಟುಕೊಂಡು
ದ್ವೇಷ ಮೆರೆದರು; ಕಟುಸತ್ಯ ಮರೆತರು
ನೂರ ಒಂದು ಕೂಡಿಕೊಂಡು
ಹಟ್ಟಿತನಕ ಅಟ್ಟಿಬಂದು
ಬೆಂಕಿ ಇಟ್ಟರು ; ಕಣ್ಣೀರು ಕೊಟ್ಟರು
ಮುರುಕುಂಬಿ ಮುರುಕರೆಲ್ಲ
ಕಂಬಿ ಹಿಂದೆ ಬಿದ್ದರಲ್ಲ
ಕೆಟ್ಟ ಮನಗಳು; ಕಡುಕೆಟ್ಟ ಜನಗಳು
ಜಾತಿಗೀತಿ ಏನು ಇಲ್ಲ
ಪ್ರೀತಿ ಪ್ರೇಮ ಇರಲಿ ಎಲ್ಲ
ಬಾಳ್ಮೆ ಮಾಡಲು; ಸಹಬಾಳ್ಮೆ ಮಾಡಲು
ಶಾಂತಿಬೆಳಕು ಬುದ್ಧನಿರಲು
ಕ್ರಾಂತಿಕಹಳೆ ಬಸವನಿರಲು
ಅಳಲುಬಾರದು;’ವಿಧಿದಾತ’ನಿರಲು
ಅಳುಕುಬಾರದು. (ಕವಿತೆ-ಡಾ. ಗಿರೀಶ್ ಮೂಗ್ತಿಹಳ್ಳಿ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯಾರು ಭೂಮಿಗೆ ಮೊದಲ ಬಾರಿಗೆ ಪ್ರೀತಿಯ ‘ಎಳೆ’ ತಂದರೋ..!

- ನವೀನ್ ಸಾಗರ್, ಬೆಂಗಳೂರು
ಸಿನಿಮಾ ಹಾಡುಗಳು ಕವನಗಳು ಎಲ್ಲ ಗದ್ಯಗಳಷ್ಟು ನೇರ ಸಲೀಸು ಅಲ್ಲ. ಹೇಳಬೇಕಿರೊದನ್ನು ಗದ್ಯಗಳ ಹಾಗೆ ಸೀದಾಸಾದಾವಾಗಿ ಕವನಗಳು, ಸಿನಿಗೀತೆಗಳು ಹೇಳುವುದಿಲ್ಲ. ಹಾಗೆ ಹೇಳಿಬಿಟ್ಟರೆ ಅವು ಕವನ/ಹಾಡು/ಪದ್ಯಗಳೇ ಅಲ್ಲ!!!
ಹಾಡು ಅಂದರೆ ಅಲ್ಲಿ ಉಪಮೆಗಳು ಗೂಢಾರ್ಥಗಳು ದ್ವಂದ್ವಾರ್ಥಗಳು(ದ್ವಂದ್ವಾರ್ಥ ಅಂದ್ರೆ ಅಶ್ಲೀಲ ಮಾತ್ರವೇ ಅಲ್ಲ), ಎರಡುಮೂರು ವಿಚಾರಗಳನ್ನು ಹೇಳಬಲ್ಲ ಒಂದೇ ಒಂದು ಸಾಲು, ಇನ್ಯಾವತ್ತೋ ರೆಲೆವೆಂಟ್ ಅನಿಸಬಲ್ಲ ಕಲ್ಪನೆಗಳು ಏನೇನೋ ತುಂಬಿಹೋಗಿರುತ್ತವೆ. ಅದಕ್ಕೊಂದು ಮೂಡ್ ಇರುತ್ತೆ.
ಒಬ್ಬೊಬ್ಬ ಓದುಗನಲ್ಲಿ ಒಂದೊಂದು ಭಾವ ಹುಟ್ಟಿಸಬಲ್ಲ ಶಕ್ತಿ ಕವಿತೆಗಳಿಗಿರುತ್ತದೆ. ನನಗೆ ರೊಮ್ಯಾಂಟಿಕ್ ಅನಿಸುವ ಗೀತೆಯೊಂದು ಇನ್ನೊಬ್ಬನಿಗೆ ವಿರಹಗೀತೆ ಅನಿಸಬಹುದು. ನನಗೆ ಲಾಲಿ ಹಾಡೆನಿಸುವ ಗೀತೆಯೊಂದು ಇನ್ಯಾರಿಗೋ ಜಾಲಿ ಗೀತೆ ಅನಿಸಬಹುದು. ಇನ್ನೊಬ್ರಿಗೆ ಶೋಕಗೀತೆ ಅನಿಸೋ ಗೀತೆಯಲ್ಲಿ ನನಗೇನೋ ತುಂಟತನ ಕಾಣಿಸಬಹುದು. ಸಭ್ಯಗೀತೆ ಅನಿಸುವ ಹಾಡೊಂದು ಸಾಲುಸಾಲಲ್ಲೂ ಡಬಲ್ ಮೀನಿಂಗ್ ತುಂಬ್ಕೊಂಡಿದೆಯಲ್ಲ ಅನಿಸಬಹುದು. ಗ್ರಹಿಕೆ ಮೂಡು ವಯಸ್ಸು ಸಂದರ್ಭ ಇವೆಲ್ಲದರ ಮೇಲೆ ಹಾಡೊಂದು ನಮ್ಮನ್ನು ತಲುಪೋ ಬಗೆ ಬದಲಾಗುತ್ತಾ ಹೋಗುತ್ತದೆ. ಅಷ್ಟಾಗಿಯೂ ಅಸಲಿಗೆ ಅದನ್ನು ಬರೆದ ಕವಿಯ ಯೋಚನೆ ನಾವು ಗ್ರಹಿಸಿದ್ದೆಲ್ಲಕ್ಕಿಂತ ಭಿನ್ನವಾಗಿದ್ದಿನ್ನೇನೋ ಇದ್ದರೂ ಇರಬಹುದು.
ಹಲವು ಬಾರಿ ಕವಿಗೆ ತನ್ನ ಗೀತೆ ತಾನಂದುಕೊಂಡ ಭಾವದಲ್ಲೇ ರೀಚ್ ಆಗಿದೆ ಅನ್ನೋ ಖುಷಿ ತೃಪ್ತಿ ಸಿಗುತ್ತದೆ. ಕೆಲವು ಬಾರಿ .. ಅರೆ ಬರೆಯುವಾಗ ನಾನೇ ಹೀಗೊಂದು ಗೂಡಾರ್ಥದ ಬಗ್ಗೆ ಯೋಚಿಸಿರಲಿಲ್ಲ. ಕೇಳುಗ ಇದಕ್ಕೆ ಇನ್ನೊಂದು ಆಯಾಮವನ್ನೇ ಕೊಟ್ಟುಬಿಟ್ಟನಲ್ಲ ಅಂತ ಅಚ್ಚರಿಯಾಗಬಹುದು. ಕೆಲವೊಮ್ಮೆ ತನಗೇ ಗೊತ್ತಿಲ್ಲದ ಅರ್ಥ ಹುಟ್ಟಿಸಿ ತನ್ನನ್ನು ಕೇಳುಗರು ಮೇಲೇರಿಸಿ ಕೂರಿಸಿದಾಗ, ಈ ಕ್ರೆಡಿಟ್ ಬಿಟ್ಟುಕೊಡಲಿಷ್ಟ ಪಡದ ಕರಪ್ಟ್ ಮನಸು.. ಹೌದೌದು ನಾನು ಹೀಗೆ ಎರಡರ್ಥ ಹುದುಗಿಸಿಈ ಸಾಲು ಬರೆದಿದ್ದೆ ಎಂದು ಧ್ವನಿಗೂಡಿಸುತ್ತದೆ. ಅದೇ ವಿವಾದಕ್ಕೋ ಅವಹೇಳನಕ್ಕೋ ಕಾರಣವಾದರೆ .. ಇಲ್ಲ ನಾನು ಬರೆದದ್ದು ಈ ಅರ್ಥದಲ್ಲಿ ಅಂತ ಸೇಫ್ಟಿ ಮೋಡ್ ಗೂ ಹೋಗುತ್ತದೆ. ಹಾಡು/ಕವಿತೆಗಳಿಗೆ ಈ ವ್ಯಾಖ್ಯಾನದ ಮೂಲಕ ಬಚಾವಾಗುವ ಇಮೇಜ್ ರೂಪಿಸಿಕೊಳ್ಳುವ ಅವಕಾಶವಿರುತ್ತದೆ. ಗದ್ಯಗಳಿಗೆ ಆ ಪ್ರಿವೆಲೇಜ್ ಇರೋದಿಲ್ಲ.
ಸಂಭ್ರಮ ಚಿತ್ರದಲ್ಲಿ ಹಂಸಲೇಖ … “ಯಾರು ಭೂಮಿಗೆ ಮೊದಲ ಬಾರಿಗೆ ಪ್ರೀತಿಯ ಎಳೆ ತಂದರೋ…” ಗೀತೆಯಲ್ಲಿ ” ಎಳೆ” ಪದವನ್ನು ಎರಡರ್ಥ ಬರುತ್ತದೆಂದೇ ಬಳಸಿದರೋ ಬರೆದ ಮೇಲೆ ಎರಡರ್ಥ ಕೇಳುಗರ ಗ್ರಹಿಕೆಗೆ ಬಂತೋ ಎಂಬ ಪ್ರಶ್ನೆಯಂತೆ ಇದು. ಹಂಸ ಲೇಖಾವ್ರು ಪ್ರೀತಿಯ ’ಎಳೆ’ಯ ಬಗ್ಗೆ ಬರೆದಿರಬಹುದು. ಅಥವಾ ಎಳೆದು ತಂದರೋ ಎಂದು ಕೇಳಿಯೂ ಬರೆದಿರಬಹುದು. ಅಥವಾ ಅವರಿಗಿರೋ ಪನ್ ಸೆನ್ಸ್ ಗೆ ಈ ಎರಡೂ ಅರ್ಥ ಬರಲಿ ಅಂತಲೇ ಎಳೆ ಎಂಬ ಪದ ಬಳಸಿರಬಹುದು. ಈ ಥರದ ಸಾಕಷ್ಟು ಉದಾಹರಣೆ ಸಿಗುತ್ತದೆ. ಸಾಹಿತ್ಯ ಗಮನಿಸಲು ಶುರು ಮಾಡಿದಾಗ ಇಂಥ ಖುಷಿ ಅನುಭೂತಿಗಳು ಸಿಗಲಾರಂಭಿಸುತ್ತವೆ. ರಿಸರ್ಚಿನಂಥ ಖುಷಿ
ಹಂಸಲೇಖರ … “ಈ ಹರಯದ ನರಕೊಳಲಲಿ ಇವೆ ಸರಿಗಮ ಹೊಳ್ಳೆಗಳು… ಈ ಮದನನ ಕಿರುಬೆರಳಲಿ ನವಿರೇಳದೆ ಗುಳ್ಳೆಗಳು..” ಈ ಸಾಲು ಕೇವಲ ಕಮರ್ಶಿಯಲ್ ಮ್ಯೂಸಿಕಲ್ ಸಾಂಗ್ ಆಗಿ ನಮ್ಮ ಕಿವಿ ತಲುಪಿದಾಗ ಗುನುಗುವ ಸಾಲಾಗುತ್ತದೆ ಅಷ್ಟೆ. ಅರೆ ಹರಯದ ನರಕೊಳಲು ಅಂದ್ರೆ ಏನು… ಮದನನ ಕಿರುಬೆರಳು ಅಂದ್ರೆ.. ? ಸಾಮಾನಿಗೆ ಇಷ್ಟು ಸಭ್ಯಶೃಂಗಾರರೂಪ ಕೊಟ್ಟು ಹೇಳಿರೋದಾ ಅನಿಸಿದಾಗ.. ಶೃಂಗಾರ ಅಡಗಿರೋ ಸಾಲಾದರೂ ಜೋರಾಗಿ ಹೇಳೋಕೆ ಮನಸು ಹಿಂಜರಿಯುತ್ತದೆ.
ಸಾಹಿತ್ಯ ಅಷ್ಟಾಗಿ ಗಮನಿಸದ ವಯಸ್ಸಲ್ಲಿ… “ಮೈಯ್ಯಲ್ಲಿ ಏಳುತಿದೆ ಮನ್ಮಥನ ಅಂಬುಗಳು.. ಜುಮ್ ಜುಮ್ ಜುಮ್..” ಅನ್ನೋ ಸಾಲು ಸಂಕ್ರಾಂತಿ ಗೀತೆ ಎಂಬಂತೆ ಬಂದು ಹೋಗುತ್ತಿತ್ತು.
ಆದರೆ ಆನಂತರ ಸಾಹಿತ್ಯವಾಗಿ ಗಮನಿಸಿದಾಗ. ಆಹಾ ರೋಮಾಂಚನವನ್ನು.. ಮೈರೋಮ ನಿಮಿರುವುದನ್ನು ಮನ್ಮಥನ ಬಾಣಕ್ಕೆ ಹೋಲಿಸಿದ್ದಾರಲ್ಲ ಅನಿಸಿ ನಿಜಕ್ಕೂ ಜುಮ್ ಅನಿಸಿತ್ತು. ಅದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ಯೋಚಿಸಿದರೆ.. ಮೈಯಲ್ಲಿ ಏಳುತಿದೆ ಮನ್ಮಥನ ಅಂಬು ಅಂದ್ರೆ.. ಒನ್ಸಗೇನ್ ಸಾಮಾನಿರಬಹುದಾ ಅನಿಸದಿರದು.
ಸದಾಶಿವಂಗೆ ಅದೇ ಗ್ಯಾನ ಅಂದ್ಕೋಬೇಡಿ..
ನೆನಪಿರಲಿ ಚಿತ್ರದ ಅಜಂತಾ ಎಲ್ಲೋರಾ ಗೀತೆಯಲ್ಲಿ ಬರುವ… “ಮಂದವಾಗಿ ಬಳುಕೋವಂಥ ನಾರಿ ಇವಳ
ಅಂದ ನೋಡಿ ನಿಂತಾಗ..ಚಂದ ನೋಡಿ ನಿಂತಾಗ..
ಯಾರೊ ನೀನು ಎಂದು ಕೇಳುತಾವೆ..
ಇವಳ ಪೊಗರಿನ ಹೃದಯಪಾಲಕಿಯರು..
ನಾಟ್ಯದಂತೆ ನಡೆಯುವಾಗ ಅತ್ತಲಾಡಿ ಇತ್ತಲಾಡಿ…”
ಈ ಸಾಲುಗಳು ತನ್ನ ರಿದಮಿಕ್ ಮ್ಯೂಸಿಕ್ ಹಾಗೂ ಸುಲಲಿತವಾಗಿ ಲಘುಗುರು ಇಟ್ಟು ಬರೆದಂಥ ಪದಗಳ ಆಟದಿಂದ ಮಜವಾಗಿ ಹಾಡಿಸಿಕೊಂಡು ಬಿಡ್ತವೆ. ಆದರೆ ಯಾವತ್ತೋ ಆರಾಮಾಗಿ ಸಾಹಿತ್ಯ ಕೇಳ್ತಾ ಇದ್ದರೆ.. ಆಹಾ ..ಹಂಸಲೇಖರ ರಸಿಕಕಲ್ಪನೆಗಳಿಗೆ ಮಿತಿಯೇ ಇಲ್ಲವಾ ಅನಿಸಿಬಿಡುತ್ತದೆ.
ಯಾರೋ ನೀನು ಎಂದು ಕೇಳುತಾವೆ ಇವಳ “ಪೊಗರಿನ ಹೃದಯ ಪಾಲಕಿಯರು” ಎಂದು ಅವರು ರೆಫರ್ ಮಾಡ್ತಿರೋದು ಆ ಹೆಣ್ಣಿನ ಸ್ತನಗಳ ಬಗ್ಗೆ ಅಂತ ಅರ್ಥವಾದಾಗ ಮತ್ತೊಮ್ಮೆ ಈ ಸಾಂಗ್ ಕೊಡುವ ಅನುಭೂತಿಯೇ ವಿಭಿನ್ನ. “ನಾಟ್ಯದಂತೆ ನಡೆಯುವಾಗ ಅತ್ತಲಾಡಿ ಇತ್ತಲಾಡಿ” ಎಂದು ಮುಂದುವರಿಸಿ ಆ ಸಾಲಿಗೆ ಇನ್ನಷ್ಟು ರಸಿಕತೆ ತುಂಬುತ್ತಾರೆ ಹಂಸ್.
ಗಡಿಬಿಡಿಗಂಡ ಚಿತ್ರದ…. ಮುದ್ದಾಡೆಂದಿದೆ ಮಲ್ಲಿಗೆ ಹೂ ಗೀತೆಯಲ್ಲಿ……. ನಾಯಕಿ”ಎದೆಯ ಸೆರಗ ಮೋಡದಲ್ಲಿ ನೀನೇ ಚಂದ್ರನೀಗ….” ಅಂದರೆ…. ನಾಯಕ” ಹೃದಯ ಮೇರುಗಿರಿಗಳಲ್ಲಿ… ಕರಗಬಹುದೆ ಈಗ” ಅಂತಾನೆ. “ಮುಡಿಯಲಿ ಮಲ್ಲಿಗೆಯ ಮುಡಿದವಳ ಮೊದಲುಮುಡಿಯಬೇಕು.. ಮಡದಿಗೆ ಪ್ರತಿದಿನವೂ ಮೊದಲಿರುಳಿರಬೇಕು…” ಅಂತ ನಾಯಕಿ ತನ್ನನ್ನು ಮೊದಲು ರಮಿಸು ಅಂತ ಒತ್ತಾಯಿಸುತ್ತಿದ್ದರೆ………… ನಾಯಕ ..” ಮನಸಿನ ಮಧುವಿನ ಮಹಲೊಳಗೆ … ಮದನ ಮಣಿಯಬೇಕು… ಸುರತಿಯ ಪರಮಾನ್ನ ಹಿತಮಿತವಿರಬೇಕು” ಅಂತ ಆಕೆಯ ಮೇಲಿರೋ ಮೋಹದ ಜೊತೆಜೊತೆಗೆ ಪ್ರತಿದಿನ ಬೇಡ ಫ್ರೀಡಮ್ಮು ವೀಕ್ಲಿ ಒನ್ಸು ಜುಮ್ ಜುಮ್ಮು” ಅಂತ ದೂರ ಹೋಗೋ ಪ್ರಯತ್ನ ಕೂಡ ಮಾಡುತ್ತಾನೆ.
ಇದು ಕೂಡ ಹೆಣ್ಣು ತನ್ನ ಗಂಡನ್ನು ಸೆಕ್ಸಿಗಾಗಿ ಕರೆಯುವ ಗೀತೆಯೇ ಆದರೂ… ತನ್ನ ಕ್ಲಾಸಿಕಲ್ ಟ್ಯೂನ್ ನಿಂದ ಚೆಂದದ ಪದಜೋಡಣೆಯಿಂದ… ಈ ಹಾಡು ಕೊಂಚವೂ ಅಶ್ಲೀಲ ಅನಿಸೋದೇ ಇಲ್ಲ. ಅಶ್ಲೀಲ ಅನಿಸಿದರೂ ಓಕೆ ಎಂದು ಬರೆದಾಗ.. ರಾತ್ರಿ ಆಯ್ತು ಮಲಗೋಣ ಇಂದು ನಮ್ಮ ಸೋಭಾನ… ಅಥವಾ ಕಾಯಿ ಕಾಯಿ ನುಗ್ಗೇಕಾಯಿ ಮಹಿಮೆಗೆ ರಾತ್ರಿಯೆಲ್ಲ ನಿದ್ದೆಯಿಲ್ಲ ಕಣ್ಣಿಗೆ.. ನೆಲ್ಲಿಕಾಯಿ ಆಸೆಗೆ ಬಿಟ್ಟು ಬಂದೆ ಹಾಸಿಗೆ ಅಂತ ಸ್ವಲ್ಪ ನೇರವಾಗಿಬಿಡುತ್ತಾರೆ ಹಂಸಲೇಖ.
ಇವೆಲ್ಲ ಸಾಹಿತ್ಯವನ್ನು ಗಮನಿಸುವಾಗ ಅರ್ಥವಾಗುತ್ತಾ ಹೋಗುವ ಅಪಾರಾರ್ಥಗಳು. ತೂಗುಮಂಚದ “ಹಮ್ಮನುಸಿರಬಿಟ್ಟಳು ಎಂಬುದು ಅಮ್ಮನುಸಿರ ಬಿಟ್ಟಳು ಎಂದಾಗಿದ್ದು ಅದನ್ನು ಲಾಲಿಹಾಡೆಂದು ತಪ್ಪು ತಿಳಿದುದರ ಪರಿಣಾಮ ಎಂದು ಹಿಂದೊಮ್ಮೆ ಬರೆದಿದ್ದು ನಿಮಗೆ ನೆನಪಿರಬಹುದು.
ಇನ್ನು ಡಬಲ್ ಮೀನಿಂಗೇ ಹುಡುಕಬೇಕು ಅಂದರೆ ಪ್ರತಿ ಗೀತೆಯೂ ಬೇರೆಯೇ ಅರ್ಥ ಕೊಡಬಲ್ಲ ಕೆಪಾಸಿಟಿ ಹೊಂದಿರುತ್ತದೆ. ಅದು ನಾವು ಆ ಗೀತೆಯನ್ನು ಬಿಂಬಿಸೋಕೆ ಹೊರಟಿರುವ ರೀತಿಯ ಮೇಲೆ ಡಿಪೆಂಡು. ಎಂಥ ಸಭ್ಯಸಾಲನ್ನೂ.. ಕವಿಗೇ ಶಾಕ್ ಆಗುವ ಹಾಗೆ ಡಬಲ್ ಮೀನಿಂಗ್ ಆಗಿಸಬಹುದು. ಆ ಉದಾಹರಣೆ ಈ ಬರಹದಲ್ಲಿ ಬೇಡ. ಮುಂದೆಂದಾದರೂ ಬರೆಯೋಣ.
ಇದೆಲ್ಲ ಬರೆಯೋಕೆ ಹೊರಟಿದ್ದಕ್ಕೆ ಪ್ರೇರಣೆ ಅಣ್ಣಯ್ಯ ಚಿತ್ರದ ಒಂದು ಸಾಂಗ್. ಅಣ್ಣಯ್ಯ ಬಂದು ಹೋಗಿ ಇಪ್ಪತ್ತೈದು ವರ್ಷಕ್ಕೂ ಹೆಚ್ಚು ಟೈಮಾಯ್ತು. ರವಿಚಂದ್ರನ್ ಸಿನಿಮಾಗಳು ಸಾಫ್ಟ್ ಪೋರ್ನ್ ಸಿನಿಮಾಗಳಂತೆ ಭಾಸವಾಗುತ್ತಿದ್ದ ನಮ್ಮ ಏಜಿನ ದಿನಗಳವು. ರವಿಚಂದ್ರನ್ ಸಿನಿಮಾಗಳನ್ನು ನೋಡೋದು ಕಾಶೀನಾಥ್ ಸಿನಿಮಾ ನೋಡೋಷ್ಟೇ ಪಾಪ ಎಂಬಷ್ಟು ಮಡಿವಂತಿಕೆ ದಿನಗಳವು. ಆದರೆ ನಮ್ಮ ಪಾಲಿಗೆ ಆಗ ರವಿಮಾಮಾ ಲವ್ ರೊಮ್ಯಾನ್ಸ್ ಶೃಂಗಾರಗಳಿಗೆ ಗಾಡ್. ಆತ ಹೀರೋಯಿನ್ ಎದೆಯ ಮೇಲೆ ಮುಖವಿಟ್ಟು ಒರಗಿದರೆ ನಮಗೆ ರಸಸ್ಫೋಟ ಆಗುತ್ತಿತ್ತು. ಕುತ್ತಿಗೆಗೊಂದು ಮುತ್ತಿಟ್ಟು ತುದಿಬೆರಳುಗಳನ್ನು ಕತ್ತು ಮತ್ತು ಎದೆಯ ನಡುವೆ ಒಮ್ಮೆ ಆಡಿಸಿದ ಅಂದರೆ ಕೊಳಲು ಲಂಬಕೋನವಾಗುತ್ತಿತ್ತು.
ಆತ ಸೆರಗು ಸರಿಸಿ ಹೊಕ್ಕಳಿಗೊಮ್ಮೆ ಮುತ್ತಿಟ್ಟರೆ ಮುಗಿದೇಹೋಯ್ತು ಊರಸ್ನಾಯುಗಳು ಬಿಗಿಯಾಗಿ ಹೋಗುತ್ತಿದ್ದವು. ಅಂದು ಹಂಸಲೇಖ ಗೀತೆಗಳು ರವಿಚಂದ್ರನ್ ನ ಪಿಚ್ಚರೈಸೇಷನ್ನಲ್ಲಿ ಕಳೆದುಹೋಗಿಬಿಡುತ್ತಿದ್ದವು. ಅಥವಾ ಸಾಹಿತ್ಯ ಸಂಗೀತ ಎಲ್ಲದರಾಚೆಗೆ ನಮಗೆ ಆ ರೊಮ್ಯಾನ್ಸೇ ಹೆಚ್ಚು ಆಕರ್ಷಿಸಿಬಿಡುತ್ತಿತ್ತು. ಕ್ಯಾಸೆಟಲ್ಲಿ ಹಾಡುಗಳನ್ನು ಕೇಳಿ ಸಿನಿಮಾಗೆ ಹೋದಾಗ ಗೀತೆಗಳು ಆಡಿಯೋಗಿಂತ ವಿಡಿಯೋವಾಗಿ ತೃಪ್ತಿಕೊಟ್ಟು ಕಳಿಸುತ್ತಿದ್ದವು. ಆದರೆ ಆನಂತರ ಸಾಹಿತ್ಯ ಗಮನಿಸುವ ಮೆಚುರಿಟಿ, ಸಾಹಿತ್ಯದಲ್ಲಿರುವ ಇಮ್ಯಾಜಿನೇಷನ್ ಪವರ್ ಆಸ್ವಾಧಿಸುವ ಮನಸ್ಥಿತಿ ಎಲ್ಲ ಬಂದಾಗ.. ರವಿ ಚಂದ್ರನ್ ಹಂಸಲೇಖರ ಗೀತೆಗೆ ಹತ್ತು ಪರ್ಸೆಂಟಷ್ಟೂ ನ್ಯಾಯ ಸಲ್ಲಿಸಲು ಸಾಧ್ಯವಾಗಿಲ್ಲ ಅನಿಸಿಬಿಟ್ಟಿದೆ. ಹಾಗಂತ ಹಂಸಲೇಖರ ಸಾಹಿತ್ಯಕ್ಕೆ ನ್ಯಾಯ ಸಲ್ಲಿಸಲು ಸಾಧ್ಯವಿತ್ತಾ? ಖಂಡಿತ ಇಲ್ಲ. ಯಥಾವತ್ ನ್ಯಾಯ ಸಲ್ಲಿಸಲು ಹೋದದ್ದೇ ಆದರೆ ಆ ಸಾಂಗ್ ನ ಪಿಚ್ಚರೈಸೇಷನ್ ಕಾಮಸೂತ್ರವಾಗಿ ಹೋಗುವಷ್ಟು ಹಾಟ್ ಆಗಿಬಿಡುತ್ತಿತ್ತು.
ಆ ಗೀತೆಗಳು ಪಿಚ್ಚರೈಸ್ ಆಗದೆಯೇ ಇಮ್ಯಾಜಿನೇಷನ್ನಲ್ಲೇ ಉಳಿದುಬಿಟ್ಟಿದ್ದರೆ ಎಷ್ಟು ಚೆಂದವಿತ್ತು ಅನಿಸಿದ್ದೂ ಇದೆ. ಸತ್ಯ ಏನಂದರೆ ರವಿಚಂದ್ರನ್ ಸಲ್ಲಿಸಿದಷ್ಟು ನ್ಯಾಯವನ್ನು ಹಂಸಲೇಖರ ಗೀತೆಗೆ ಇನ್ಯಾರೂ ಸಲ್ಲಿಸಲು ಸಾಧ್ಯವಾಗಲಿಲ್ಲ. ರೊಮ್ಯಾಂಟಿಕ್ ಗೀತೆಗಳಲ್ಲಿ ಮಾತ್ರವಲ್ಲ… ಬೇರೆ ಗಂಭೀರ/ಸ್ಯಾಡ್/ಫಿಲಾಸಫಿಕಲ್/ಕ್ರಾಂತಿ ಯಾವ ಗೀತೆಗಳಿಗೂ ವಿಶ್ಯುಯಲಿ ನ್ಯಾಯ ಸಿಕ್ಕಿಲ್ಲ. ಇದು ಹಂಸಲೇಖ ಮಾತ್ರ ಅಲ್ಲ.. ಬಹುತೇಕ ಸಾಹಿತಿಗಳ ಮನಸಿನ ಮೂಲೆಯ ಅಸಮಾಧಾನ ಹಾಗೂ ನೋಡುಗರ ಅಸಂತೃಪ್ತಿ. ಮೊನ್ನೆ ನಾನು ಶೇರ್ ಮಾಡಿಕೊಂಡ ” ಸುಮ್ಮನೆ ಹೀಗೆ ನಿನ್ನನೇ …:” ಎಂಬ ಅಮರ್ ಚಿತ್ರದ ಗೀತೆಯಾದರೂ ಅಷ್ಟೆ. ಅಷ್ಟು ಗಾಢ ಸಾಲುಗಳ ಗೀತೆಗೆ ಅಂಬರೀಶ್ ಪುತ್ರನಿಂದ ಕಲ್ಲುಬಂಡೆಯಂಥ ಅಭಿನಯ. ಇಡೀ ಹಾಡನ್ನು ಲಾಂಗ್ ಶಾಟ್ ಗಳಲ್ಲಿ ತೆಗೆದು ಪ್ರಕೃತಿ ಸೌಂದರ್ಯ ತೋರಿಸಿ ಮುಗಿಸಿದ್ದಾರೆ ನಾಗಶೇಖರ್. ಸಾಹಿತ್ಯಕ್ಕೆ ಸಂಗೀತ ಸಲ್ಲಿಸುವಷ್ಟು ನ್ಯಾಯವನ್ನು ದೃಶ್ಯರೂಪ ಸಲ್ಲಿಸಲು ಸಾಧ್ಯವಿಲ್ಲ. ಬೆಟರ್ ನಾವು ಹಾಡುಗಳನ್ನು ನಮ್ಮ ಇಮ್ಯಾಜಿನೇಷನ್ ಗೆ ತಕ್ಕಂತೆ ಕಣ್ಮುಚ್ಚಿಕೊಂಡು ಮನಸ್ಸಿನೊಳಗೇ ಚಿತ್ರಿಸಿಕೊಂಡುಬಿಡುವುದು.
ಬ್ಯಾಕ್ ಟು ಅಣ್ಣಯ್ಯ ಚಿತ್ರದ ಆ ಸಾಂಗ್ : ಇಷ್ಟು ವರ್ಷದಲ್ಲಿ ಈ ಹಾಡನ್ನು ಕಮ್ಮಿ ಅಂದ್ರೂ ಒಂದು ಸಾವಿರ ಸಲ ಕೇಳಿರುತ್ತೇನೆ. ಹಿಟ್ ಆಲ್ಪಮ್ ಆಗಿರುವ ಅದರ ಕಡಿಮೆ ಪಾಪ್ಯುಲರ್ ಗೀತೆ ಅದು.
“ಅ ಹಾಗೆ ಪ್ರೇಮಿ ಓಹೋ.. ಒ ಹೋಗೆ ಪ್ರೇಮಿ ಆಹಾ…”
ಈ ಹಾಡಿನ ಚಿತ್ರಣ ನಿಮ್ಮನ್ನು ಸಾಹಿತ್ಯ ಗಮನಿಸದಷ್ಟು ಸೆಳೆದುಕೊಳ್ಳುತ್ತದೆ ಕಾರಣ. ರವಿಚಂದ್ರನ್ ಮಧುಬಾಲಾ ಕೆಮಿಸ್ಟ್ರಿ! ಆದರೆ ಅದ್ಯಾಕೋ ಗೀತೆ ತುಂಬ ಅಟ್ರಾಕ್ಟಿವ್ ಅನಿಸಿರಲಿಲ್ಲ. ಕಮಾನು ಡಾರ್ಲಿಂಗ್, ಅಣ್ಣಯ್ಯ ಅಣ್ಣಯ್ಯ ಬಾರೋ, ರಾಗಿ ಹೊಲದಾಗೆ ಖಾಲಿ ಗುಡಿಸಲು ಈ ಗೀತೆಗಳು ಕೊಟ್ಟ ಕಿಕ್ …. ಈ ಅ ಹಾಗೆ ಪ್ರೇಮಿ ಓಹೋ… ಒ ಹೋಗೆ ಪ್ರೇಮಿ ಆಹಾ ಗೀತೆ ನೀಡಿರಲಿಲ್ಲ.
ಹೌದು ನಾನು ಈ ಹಾಡನ್ನು ಕೇಳಿಸಿಕೊಳ್ತಾ ಇದ್ದದ್ದೇ ಹೀಗೆ. ಮೊನ್ನೆಯ ತನಕವೂ…ಆದರೆ ಮೊನ್ನೆ ಯಾಕೋ ಮತ್ತೊಮ್ಮೆ ಕೇಳಿಸಿಕೊಂಡಾಗ.. ಅರೆ ಇಪ್ಪತ್ತೈದು ವರ್ಷ ತಪ್ಪಾಗಿ ತಿಳಿದುಕೊಂಡು ತಪ್ಪಾಗೇ ಹಾಡಿಕೊಂಡೆನಲ್ಲ ಅಂತ ಮೈತುಂಬ ಗಿಲ್ಟು
ಆ ಸಾಂಗ್ ಇರೋದು ಹೀಗೆ…
”ಆಹಾ’ಗೆ ಪ್ರೇಮಿ “ಓಹೋ”
” ಓಹೋ”ಗೆ ಪ್ರೇಮಿ ” ಆಹಾ”
ನನ್ನ ಹಾಗೆ ಅದೆಷ್ಟು ಜನ ಯಾಮಾರಿದ್ದೀರೋ ಗೊತ್ತಿಲ್ಲ. ಅಥವಾ ನಾನೊಬ್ನೇ ಹೀಗೆ ತಪ್ಪಾಗಿ ಕೇಳಿಸಿಕೊಂಡವ್ನೋ ಗೊತ್ತಿಲ್ಲ
ಈ ಗೀತೆಯ ವಿಶೇಷ ಏನಂದ್ರೆ ಹಂಸಲೇಖ. ಆಹಾ ಮತ್ತು ಓಹೋ ಎಂಬ ಎರಡು ಪದಗಳನ್ನೇ ಪ್ರೇಮಿಗಳನ್ನಾಗಿಸಿದ್ದಾರೆ
ಆಹಾಗೆ ಓಹೋ ಪ್ರೇಮಿ… ಓಹೋಗೆ ಆಹಾ ಪ್ರೇಮಿ!
ಅದು ಇಬ್ಬರು ಪ್ರೇಮಿಗಳ ಹೆಸರು!
ಈಗ ಈ ಹಾಡೊಮ್ಮೆ ಕೇಳಿನೋಡಿ…
ಅದು ಸೌಂಡಾಗೋದೇ ಬೇರೆ ಥರ!
ಅದ್ಯಾಕೆ ಆಹಾ ಓಹೋ ಎಂಬ ಪದಗಳು ಇಲ್ಲಿ ಪಾತ್ರಗಳಾದವು ಅಂತ ಸಿನಿಮಾ ತೆರೆದು ನೋಡಿದೆ. ಈ ಹಾಡು ಆರಂಭವಾಗುವ ಮುನ್ನ ಅಣ್ಣಯ್ಯ ಯಾವುದೋ ಫೈಟಿಂಗಲ್ಲಿ ಒದೆ ತಿಂದು ಬೆನ್ನಿಗೆ ಕಾಶಿ ಕೈಲಿ ಬಿಸಿ ಮಸಾಜ್ ಮಾಡಿಸಿಕೊಳ್ತಾ ಇರ್ತಾನೆ. ಅವನ ಇಮ್ಯಾಜಿನೇಷನಲ್ಲಿ ನಾಯಕಿ ಬಂದು ಕಾಶಿಯ ಬದಲು ಮಸಾಜ್ ಮಾಡ್ತಿರೋ ಹಾಗೆ ಒಂದು ಟ್ವಿಸ್ಟು.. ಇಮ್ಯಾಜಿನೇಷನಲ್ಲೇ ಅವಳೊಂದಿಗೆ ಮಾತಾಡ್ತಾ.. ಆಕೆ ಬಿಸಿ ಶಾಖ ಕೊಟ್ಟಾಗ ಒಮ್ಮೆ ನಾಯಕ ಆಹಾ ಅಂತಾನೆ.. ಇನ್ನೊಮ್ಮೆ ಓಹೋ ಎಂದು ಬಿಗಿಯುಸಿರು ಬಿಡುತ್ತಾನೆ. ಆಗ ಹುಟ್ಟುವ ಹಾಡಿದು. ಡ್ರೀಮ್ ಸಾಂಗ್ ನಲ್ಲಿ ಟೆಕ್ಸ್ಟ್ ಕೂಡ ಬರುತ್ತದೆ ಆಹಾ ಓಹೋ ಅಂತ!
ಸ್ಕ್ರಿಪ್ಟ್ ಜೊತೆ ದೃಶ್ಯರಚನೆ ಜೊತೆ ಗೀತ ಸಾಹಿತಿ ಕನೆಕ್ಟ್ ಆದಾಗ ಇಂಥ ಅದ್ಭುತಗಳು, ಮಜಗಳು, ಕ್ರಿಯೇಟಿವ್ ಐಡಿಯಾಗಳು ಹುಟ್ಟುತ್ತವೆ. ಹಂಸಲೇಖ ಎಲ್ಲೋ ಕೂತು ಹಾಡುಬರೆದುಕೊಟ್ಟು ಸಂಗೀತ ಮಾಡಿಕೊಡ್ತಿರಲಿಲ್ಲ. ಸಿನಿಮಾದೊಂದಿಗೆ ಪ್ರೀ ಪ್ರೊಡಕ್ಷನ್ನಿಂದ ರೀರೆಕಾರ್ಡಿನ ತನಕ ಜರ್ನಿ ಮಾಡ್ತಿದ್ರು ಅನ್ನೋದಕ್ಕೆ ಇದೊಂದು ಸಾಕ್ಷಿ. ಅವರಿಬ್ಬರ ಕಾಂಬಿನೇಷನ್ ಯಾಕೆ ಆ ಪರಿ ಕ್ಲಿಕ್ ಆಗುತ್ತಿತ್ತು ಅನ್ನೋದಕ್ಕೂ ಇದೊಂದು ಪುರಾವೆ. ( ಬರಹ : ನವೀನ್ ಸಾಗರ್ ; ಫೇಸ್ ಬುಕ್ ನಿಂದ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ
-
ದಿನದ ಸುದ್ದಿ3 days ago
ಕವಿತೆ | ನಾನೊಲಿದೆನಯ್ಯಾ
-
ದಿನದ ಸುದ್ದಿ5 days ago
ತುಂಬಿದ ಕೊಡ ತುಳುಕಿತಲೇ ಪರಾಕ್..!
-
ದಿನದ ಸುದ್ದಿ4 days ago
ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ
-
ದಿನದ ಸುದ್ದಿ2 days ago
ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ; 7 ರಂದು ಬಜೆಟ್ ಮಂಡನೆಗೆ ಸರ್ಕಾರ ನಿರ್ಧಾರ
-
ದಿನದ ಸುದ್ದಿ2 days ago
ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು : ಈಶ್ವರಾನಂದಪುರಿ ಸ್ವಾಮೀಜಿ
-
ದಿನದ ಸುದ್ದಿ21 hours ago
ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ6 hours ago
ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1.99 ಕೋಟಿ