Connect with us

ಭಾಮಿನಿ

ಒಂಟಿತನಕ್ಕೂ ಬದುಕುಂಟು..!

Published

on

“ಯಾರನ್ನು ಬಿಟ್ಟು ಬದುಕುವುದಿಲ್ಲ ಅಂದುಕೊಂಡಿರುತ್ತೇವೇಯೋ ಅದೆಲ್ಲವನ್ನು ಮೀರಿ ಬೆಳೆದು ಬಿಡುತ್ತದೆ ಬದುಕು”…

ಪದ್ಮಮ್ಮ ವೃತ್ತಿಯಲ್ಲಿ ನರ್ಸ್, ಆಗಿನ ಕಾಲಕ್ಕೆ ಆ ಹಳ್ಳಿಗರ ಪಾಲಿನ ಆಪದ್ಭಂದು. ಯಾವುದೇ ಹೆರಿಗೆಗಾಗಿರಲಿ,ಯಾರಿಗೆ ಜ್ವರ ಬರಲಿ ಎಲ್ಲರೂ ಪದ್ಮಮ್ಮನ ಮನೆ ಕದ ತಟ್ಟುತ್ತಿದ್ದವರೇ. ಸರಿರಾತ್ರಿಯಲ್ಲಿ ಕೂಡ ಯಾರೇ ಬಂದೂ ಕರೆದರೂ ಇಲ್ಲ ಎನ್ನದೇ ಹೋಗಿ ಚಿಕಿತ್ಸೆ ಮಾಡಿ ತನ್ನ ವೃತ್ತಿನಿಷ್ಠೆ ಮೆರೆದ ಪದ್ಮಮ್ಮ ತುಂಬಾ ಚಿಕ್ಕ ವಯಸ್ಸಿಗೆ ವಿಧವೆ ಪಟ್ಟವನ್ನು ಯಮರಾಯನಿಂದ ಬಳುವಳಿಯಾಗಿ ಪಡೆದವರು. ಆ ಊರಿನಾಚೆಯ ಸ್ವಚ್ಛಂದ ಪರಿಸರದಲ್ಲಿ ಒಬ್ಬಳೇ ಬದುಕುತ್ತಿರುವ, ಒಂಟಿತನವನ್ನು ಶಪಿಸದೇ ಗಿಡ, ಮರ, ಬಳ್ಳಿಗಳೊಂದಿಗೆ, ಝುಳು-ಝುಳು ಹರಿವ ನದಿತೊರೆಗಳ ನಡುವೆ ದಿನಕ್ಕೆ 10 ಬಾರಿಯಾದರೂ ಕೂಗುವ ರೈಲಿನ ಶಬ್ಧದೊಂದಿಗೆ ತಮ್ಮ ಒಂಟಿತನದ ಬದುಕನ್ನು ಪರಿಸರದೊಂದಿಗೆ ಸವಿದುಂಡು ಸವೆಸುತ್ತಿರುವವರು. ಮಕ್ಕಳೊಂದಿಗೆ ಹೋಗಿ ದೂರದ ಸಿಟಿಯಲ್ಲಿ ಇರಬಹುದಲ್ಲಾ ಎಂದರೆ, ನಗುತ್ತಾ ಗಿಡಕ್ಕೆ ನೀರು ಹಾಕಲು ಅಣಿಯಾಗುವ ಆ ಒಂದು ನಗು ಅವರ ಆ ಒಂಟಿತನದ ಬದುಕಿನ ಖುಷಿಯ ಹಾಗೂ ಬೇರೆಯವರಿಗೆ ಹೊರೆಯಾಗದಂತೆ ಬದುಕಬೇಕೆಂಬ ಸ್ವಾಭಿಮಾನದ ಪ್ರತಿಬಿಂಬವೇ ಸರಿ.

ಕೆಲವೊಮ್ಮೆ ಬಾಳ ದಾರಿಯಲ್ಲಿ ಎದುರಾಗುವ ಅನಿರೀಕ್ಷಿತ ಆಘಾತಗಳು ನಮ್ಮವರನ್ನೆಲ್ಲಾ ನಮ್ಮಿಂದ ದೂರವಾಗಿಸಿ ಒಂಟಿತನ ನಮ್ಮ ಬಂಧುವಾಗಿ ಬಿಡುತ್ತೆ. ಯಾರನ್ನು ಬಿಟ್ಟು ಬದುಕುವುದೇ ಇಲ್ಲ
ಅಂದುಕೊಂಡಿರುತ್ತೇವೆಯೋ ಅದೆಲ್ಲವನ್ನು ಮೀರಿಸಿ ಬದುಕುವಂತೆ ಮಾಡಿ ಬಿಡುತ್ತದೆ. ಕೆಲವರು ತಾವಾಗೇ ಅದನ್ನು ಆರಿಸಿಕೊಂಡರೆ ಇನ್ನೂ ಕೆಲವರು ಅನಿವಾರ್ಯವಾಗಿ ಒಂಟಿಯಾದವರು. ಕೆಲವರಿಗೆ ಶಾಪವಾದರೆ ಮತ್ತೆ ಕೆಲವರು ಆ ಒಂಟಿತನದಲ್ಲೇ ಜೀವನದ ಖುಷಿಯನ್ನು ಬಗೆದು ತೆಗೆದವರು ಪದ್ಮಮ್ಮನ ಥರ.

ಶೃತಿಗೆ ಮದುವೆಯಾದಾಗ ಬರೀ 20 ವರ್ಷ. ಮದುವೆಯಾಗಿ ವರ್ಷ ತುಂಬುವುದರೊಳಗೆ ವಿಧಿಯಾಟಕ್ಕೆ ಬಲಿಯಾಗಿ ಕುಂಕುಮಭಾಗ್ಯ ಕೈ ಜಾರಿತು. ಆದರೆ, ಅವಳು ಬದುಕುತ್ತಿರುವ ಬದುಕು ಮಾತ್ರ ಅಚ್ಚರಿ ಮೂಡಿಸುತ್ತದೆ. ಪ್ರೀತಿಯ ಗಂಡನನ್ನು ಕಳೆದುಕೊಂಡಾಗ ಅವಳ ಮಗ ಇನ್ನೂ ಈ ಪ್ರಪಂಚವನ್ನು ಕಣ್ಬಿಟ್ಟು ನೋಡದೇ ಅವಳ ಹೊಟ್ಟೆಯಲ್ಲಿ ಬೆಚ್ಚಗೆ ಮಲಗಿದ್ದ. ಜೀವನಸಂಗಾತಿಯ ಅಗಲಿಕೆಯಿಂದ ಅಗಾಧ ನೋವುಂಡ ಅವಳಿಗೆ ಜೀವಸಂಗಾತಿಯಾಗಿದ್ದು ತನ್ನ ಪ್ರೀತಿಯ ಮಗ. ಗಂಡ ತೀರಿಕೊಂಡಾಗ, ನಿನಗಿನ್ನು ಚಿಕ್ಕವಯಸ್ಸು 2 ನೇ ಮದುವೆ ಮಾಡಿಕೋ ಎಂದು ನೀಡಿದ ಸಲಹೆಗೆ ಸೊಪ್ಪು ಹಾಕದೇ ನನ್ನ ಗಂಡನ ಪ್ರೇಮದ ಕಾಣಿಕೆಯಾಗಿ ನನ್ನ ಮಗನಿದ್ದಾನೆ. ಅವನಿಗಾಗಿಯೇ ನನ್ನ ಬದುಕು ಎಂದು ದಿಟ್ಟ ನಿರ್ಧಾರ ಮಾಡಿ ತನ್ನ ಸರ್ವಸುಖಗಳನ್ನು ತ್ಯಾಗ ಮಾಡಿ ಮಗನ ಪ್ರತೀ ಹೆಜ್ಜೆಯಲ್ಲೂ ಬದುಕಿನ ಸಂತೋಷ ಕಂಡುಕೊಂಡಿದ್ದಾಳೆ. ಅವಳನ್ನು ಮೊದಮೊದಲು ಕಂಡಾಗೆಲ್ಲಾ ಕರುಣೆ ಬರುತ್ತಿತ್ತು. ಈಗೀಗ ಹೆಮ್ಮೆ ಅನಿಸುತ್ತೆ. ಏಕೆಂದರೆ ತನ್ನ ಮಗನನ್ನು ಡಾಕ್ಟರ್ ಓದಿಸುವ ಆಸೆಯೊಂದಿಗೆ ಪ್ರತಿಷ್ಠಿತ ಸ್ಕೂಲ್‍ವೊಂದರಲ್ಲಿ ಮಗನನ್ನು ಸೇರಿಸಿ, ಅದೇ ಸ್ಕೂಲ್‍ನ ನೌಕರರ ಮಕ್ಕಳಿಗೆ ಯಾವುದೇ ಫೀಸ್ ಇಲ್ಲ ಎನ್ನುವ ಕಾರಣಕ್ಕೆ ತಾನೂ ಅದೇ ಸ್ಕೂಲ್‍ನಲ್ಲಿ ಅಟೆಂಡರ್ ಆಗಿ ಕೆಲಸ ಮಾಡ್ತಿದ್ದಾಳೆ. ಅಷ್ಟೇ ಅಲ್ಲ ಸ್ಕೂಲ್ ಕೆಲಸ ಮುಗಿದ ನಂತರ ರಾತ್ರಿ 8 ಗಂಟೆವರೆಗೆ ಟೈಲರ್ ಶಾಪ್‍ವೊಂದರಲ್ಲಿ ಕೆಲಸ ಮಾಡಿ ರಾತ್ರಿ ಗಡಿಬಿಡಿಯಲ್ಲೇ ಮನೆಗೆ ಹೊರಡುವ ಅವಳು ಮಗನನ್ನು ಪಕ್ಕದ ಮನೆಯವರಿಗೆ ನೋಡಿಕೊಳ್ಳಲು ಹೇಳಿ ಬಿಟ್ಟು ಬಂದಿರುತ್ತಾಳೆ. ಎಷ್ಟೊತ್ತಿಗೆ ಮನೆಗೆ ಹೋಗಿ ಮಗನ ನೋಡ್ತಿನಿ ಅಂತ ಮನೆ ತಲುಪುವವರೆಗೆ ತವಕಿಸುವ ಆ ತಾಯಿಕರುಳು ಒಂಟಿತನದಲ್ಲೇ ಸಾರ್ಥಕತೆ ಮೆರೆಯುತ್ತಿರುವುದನ್ನು ಕಂಡಾಗ ಶೃತಿ ನಿಜಕ್ಕೂ ಮನಸ್ಸಿನಲ್ಲಿ ಅರಿವಿಲ್ಲದೇ ಎತ್ತರದ ಸ್ಥಾನ ಗಿಟ್ಟಿಸಿಕೊಂಡು ಬಿಡುತ್ತಾಳೆ.

ಇನ್ನು ನಮ್ಮ ಸರೋಜಮ್ಮ ಬದುಕಿನ ಎಲ್ಲಾ ಘಟ್ಟಗಳನ್ನು ದಾಟಿ, ಅಂದರೆ ಮಗಳಾಗಿ, ಹೆಂಡ್ತಿಯಾಗಿ, ಅಮ್ಮನಾಗಿ, ಅಜ್ಜಿ ಪೋಸ್ಟ್ ಗೆ ಕೂಡ ಪ್ರಮೋಶನ್ ತಗೊಂಡು ಸದ್ಯ ರಿಟೈರ್ಡ್ ಆಗಿ ಆರಾಮಾಗಿದ್ದಾರೆ. ಏನೇ ಸರೋಜಾ, ಸುಮ್ನೆ ಮಗಳ ಜೊತೆ ಹೋಗಿ ಇರೋದ್ ತಾನೇ? ಅಂತ ಯಾರೋ ಪುಕ್ಕಟ್ಟೆ ಸಲಹೆ ಕೊಟ್ರೆ ಅಯ್ಯೋ ನನಗೇನೆ ಆಗಿದೆ ಮಹಾರಾಣಿ ಥರ ಇದೀನಿ, ಆಳು ಕಾಳಿಲ್ಲ ಅಷ್ಟೇ ಅಂತ ನಕ್ಕುಬಿಡ್ತಾರೆ. ಮದುವೆ ಆದಾಗಿನಿಂದ ಗಂಡ ಅತ್ತೆ- ಮಾವ ಮಕ್ಕಳು, ನೆಂಟ್ರು ಅವ್ರು ಇವ್ರು ಅಂತ ಬದುಕಿದ್ದೇ ಆಯ್ತು.ಸಂಸಾರ ಅನ್ನೋ ಪಂಜರದಲ್ಲಿ ನನ್ನನ್ನು ನಾನೇ ಬಂಧಿಸಿಕೊಂಡಿದ್ದೆ. ಈಗ ಜವಾಬ್ದಾರಿಗಳೆಲ್ಲಾ ಮುಗಿದಿದೆ. ಆಗಿನ ಥರ ಎಲ್ಲೇ ಹೋದ್ರೂ ಬೇಗ ಹೋಗ್ಬೇಕು, ಯಜಮಾನ್ರು ಬರ್ತಾರೆ, ಮಕ್ಕಳು ಸ್ಕೂಲಿಂದ ಬರ್ತಾರೆ ಅನ್ನೋ ಅರ್ಜೆಂಟ್ ಇಲ್ಲ.ಇಷ್ಟ ಬಂದಷ್ಟು ಹೊತ್ತು ದೇವಸ್ಥಾನದಲ್ಲಿ ಕೂರಬಹುದು. ಯೌವ್ವನದಲ್ಲಿ ಸಂಗೀತವನ್ನೇ ಉಸಿರಾಗಿಸಿಕೊಂಡು, ಮದುವೆಯಾದ ನಂತರ ಸಂಸಾರದಲ್ಲೇ ಉಸಿರುಗಟ್ಟಿಸಿಕೊಂಡಿದ್ದ ನನಗೆ ಈಗ ಎಲ್ಲೇ ಸಂಗೀತ ಕಛೇರಿ ಇದ್ರೂ ಮನಸ್ಸಿಗೆ ತೃಪ್ತಿಯಾಗೋವರೆಗೂ ಕೇಳಿ ಬರ್ತಿನಿ ಎನ್ನುವ ಅವರು, ಜೀವನ ಯಾವಾಗಲೂ ಅಂದುಕೊಂಡಂತೆ ಇರಲ್ಲ,ಎಲ್ಲಾದಕ್ಕೂ ಹೊಂದಿಕೊಂಡು ಹೋಗ್ಬೇಕು. ಕಳ್ಕೊಂಡಿದ್ದರ ಕುರಿತು ಕೊರಗೋದ್ರಿಂದ ಏನೂ ಪ್ರಯೋಜನವಿಲ್ಲ,ಇರೋದ್ರಲ್ಲೇ ಖುಷಿ ಹುಡುಕ್‍ಬೇಕು ಎಂದು ಕೆನ್ನೆ ಸವರಿ ಇಳಿಸಂಜೆಯಲ್ಲಿ ತಂಗಾಳಿಯಂತೆ ಸುಳಿದು ಮರೆಯಾದಾಗ ಮನಸ್ಸಿಗೆ ಹಗುರವೆನಿಸುವ ಭಾವ ಅಂಟಿದಂತಿತ್ತು.

ಅನಿವಾರ್ಯತೆಯಿಂದ ಒಂಟಿತನವನ್ನು ಒಪ್ಪಿಕೊಂಡವರು ಇವರಾದರೆ, ಡಾ.ಜಗದಾಂಬ ಒಂಟಿತನವನ್ನು ತಾವೇ ಆಯ್ಕೆ ಮಾಡಿಕೊಂಡವರು. ಡಾ. ಆಗಿ ಎಂದಿಗೂ ವೃತ್ತಿಧರ್ಮವನ್ನು,ಸ್ವಾಭಿಮಾನವನ್ನು ಬಿಟ್ಟುಕೊಡದ ಛಲವಂತೆ. ಸಂಸಾರ ನೌಕೆ ಬಿರುಗಾಳಿಗೆ ಸಿಲುಕಿದಾಗ ನಲುಗದೇ ಆ ನೌಕೆಯಿಂದ ಇಳಿದು ಒಬ್ಬರೇ ಮುಂದೆ ನಡೆದವರು. ವೈದ್ಯರಾಗಿ ಅದೆಷ್ಟೋ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದ್ದಲ್ಲದೇ,ಅದೆಷ್ಟೋ ಜನರ ಕಷ್ಟಗಳಿಗೆ ಸಹಾಯ ಹಸ್ತ ನೀಡಿ ಸಾರ್ಥಕತೆ ಮೆರೆದವರು, ಸಂಸಾರವೆಂಬ ಬಟ್ಟೆ ಹರಿದಾಗ ಅದಕ್ಕೆ ತೇಪೆ ಹಾಕುವ ಬದಲು, ಅದನ್ನು ಬಿಸಾಡಿ ಒಂಟಿತನವೆಂಬ ಹೊಸಬಟ್ಟೆ ತೊಡುವುದು ಒಳ್ಳೆಯದು ಎಂಬ ಸಿದ್ದಾಂತವನ್ನು ಅನುಸರಿಸಿದವರು. ಅವರು ಹೇಳುವ ಹಾಗೇ ಬಲವಂತವಾಗಿ ನಮ್ಮ ತನವನ್ನು ತೊರೆದು ಬದುಕುವುದಕ್ಕಿಂತ ಒಂಟಿಯಾಗಿ ಬದುಕುವುದು ಲೇಸು ಅನ್ನೋ ಮಾತು ಕೆಲವು ಸಂದರ್ಭಗಳಲ್ಲಿ ಇಷ್ಟವಾಗುತ್ತೆ.

ಬದುಕಿನ ಆಕಸ್ಮಿಕವೋ ಅನಿವಾರ್ಯತೆಯೋ, ನೈಸ್ ರೋಡಿನಂತಿದ್ದ ಜೀವನ ಗುಂಡಿಬಿದ್ದ ರಸ್ತೆಯಂತಾಗಿ ಬಿಡುತ್ತದೆ. ಆಗ ಎದೆಗುಂದದೇ ಬಂದ ಪರಿಸ್ಥಿತಿಯನ್ನು,ಅನಿವಾರ್ಯ ಉಂಟಾದಾಗ ಒಂಟಿತನವನ್ನು ಒಪ್ಪಿಕೊಂಡು ಅಪ್ಪಿಕೊಳ್ಳುವುದು ತಪ್ಪಲ್ಲ. ಅಥವಾ ಅದೇ ಅಂತಿಮವೂ ಅಲ್ಲ. ಏಕೆಂದರೆ ಒಂಟಿತನ ಶಾಪವಲ್ಲ, ಒಳಹೊಕ್ಕು ನೋಡಿದರೆ ಅದರಲ್ಲೂ ಒಂದು ಬಗೆಯ ಸುಖವುಂಟು, ಒಂಟಿತನಕ್ಕೂ ಬದುಕುಂಟು, ಬದುಕಿದಾಗ ಮಾತ್ರ.

– ಆಕಾಶಪ್ರಿಯ
ಪತ್ರಕರ್ತೆ
ಬೆಂಗಳೂರು

ಸುದ್ದಿದಿನ.ಕಾಂ|ವಾಟ್ಸಾಪ್|9986715401

ರಂಜಿತ ಎಮ್ .ಜಿ ಅಲಿಯಾಸ್ ಆಕಾಶಪ್ರಿಯ ಅವರು ಹುಟ್ಟಿ ಬೆಳೆದಿದ್ದು ಹಾಸನದಲ್ಲಿ. ಮೈಸೂರು ವಿವಿಯಿಂದ ಬಿಎ ಪದವಿ ಪಡೆದಿದ್ದಾರೆ. ಕನ್ನಡ ಸಾಹಿತ್ಯದ ಶ್ರೀಮಂತಿಕೆಗೆ ಮಾರುಹೋಗಿ ಸಾಹಿತ್ಯದ ಬಗ್ಗೆ ಒಲವು ಮೂಡಿಸಿಕೊಂಡಿದ್ದು, ಬರವಣಿಗೆಯಲ್ಲಿ ಇದೀಗ ಅಂಬೇಗಾಲಿಡುತ್ತಿದ್ದಾರೆ. ಇವರು ಮಾಧ್ಯಮ ಲೋಕದತ್ತ ಆಸಕ್ತಿ ಮೂಡಿ ಸಧ್ಯಕ್ಕೆ ಟಿವಿ 1 ನ್ಯೂಸ್ ಚಾನೆಲ್ ನಲ್ಲಿ ಕಾಪಿ ಎಡಿಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕಗ್ಗತ್ತಲ ವ್ಯಾಪಾರದಲ್ಲಿ, ವೇಶ್ಯೆ ಅಳುವ ಮಗು..!

Published

on

  • ಮೈತ್ರಾವತಿ ವಿ. ಐರಣಿ, ಚಿಕ್ಕಬೂದಿಹಾಳು, ದಾವಣಗೆರೆ

ವೇಶ್ಯಾವಾಟಿಕೆ ಎಂಬುದು ಸ್ತ್ರೀ ಕುಲಕ್ಕೆ ಅಂಟಿಕೊಂಡಿರುವ ಅಭಿಶಾಪಗಳಲ್ಲೊಂದು!ಇಂತಹ ಶಾಪದ ಕೂಪವನ್ನು ಸೃಷ್ಟಿಸಿದವರು,ಪೋಷಿಸಿದವರು ,ಪರವಾನಿಗೆ ಕೊಟ್ಟವರು ನಮ್ಮ ಸೋ ಕಾಲ್ಡ್ ಮಾರ್ಯದಸ್ಥ ಸಮಾಜ.

ವೇಶ್ಯಾ ವೃತ್ತಿ ಎಂದರೆ ಹಣದ ಪ್ರತಿಫಲಕ್ಕಾಗಿ ಲೈಂಗಿಕ ಚಟುವಟಿಕೆಯಲ್ಲಿ ತೊಡಗುವ ಕ್ರಿಯೆ. ಜಗತ್ತಿನಾದ್ಯಂತ ಅನಾದಿಕಾಲದಿಂದಲೂ ಇದು ರೂಢಿಯಲ್ಲಿದೆ. ವಿಪರ್ಯಾಸ ಏನೆಂದರೆ ಕಾಲಾಂತರದಲ್ಲಿ ಈ ವೃತ್ತಿಗೆ ಆಧುನಿಕತೆಯ ಸ್ಪರ್ಶ ಸಿಕ್ಕು ಹೈಟೆಕ್ ದಂಧೆಯಾಗಿ,ವ್ಯವಹಾರವಾಗಿ ಹೆಮ್ಮರವಾಗಿ ಬೆಳೆದು ನಿಂತಿದೆ. ಇದರಲ್ಲಿ ಪುರುಷರ ಸಹಭಾಗಿತ್ವ ಇದ್ದರೂ ದೂಷಿಸುವುದು ಮಾತ್ರ ಸ್ತ್ರೀಯರನ್ನೇ ಇದು ಯಾವ ಕಾಡಿನ ನ್ಯಾಯ? ನನಗಿವತ್ತಿಗೂ ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ.

ಅದ್ಯಾರದ್ದೇ ಬದುಕಾಗಿರಬಹುದು ಬದುಕಲಾರದಷ್ಟು ಅಸಹ್ಯವಾಗಿರುವುದಿಲ್ಲ,ಹೇಸಿಗೆ ಪಡುವಷ್ಟು ನಿಷ್ಕೃಷ್ಠವಾಗಿರುವುದಿಲ್ಲ,ಲೋಕನಿಂದನೆಗೊಳಗಾಗಿ ಮುಖ ಮುಚ್ಚಿ ಓಡಾಡುವಂತಹ ಹೀನ ಸ್ಥಿತಿ ಇರುವುದಿಲ್ಲ. ಅಷ್ಟಕ್ಕೂ ಯಾರ ಬದುಕು ದಟ್ಟ ದರಿದ್ರವಲ್ಲ.ಅವರವರ ವೃತ್ತಿಗೆ ಅವರದೇ ನೆಲೆಯಲ್ಲಿ ತಕ್ಕುದಾದ ಗೌರವ ಆದರಗಳಿರುತ್ತವೆ. ಅವನೆಂತಹ ನೀಚನೇ ಆಗಿರಲಿ,ಪರಮಪಾಪಿಯೇ ಆಗಿರಲಿ, ಕೊಲೆಗಡುಕನೇ ಆಗಿರಲಿ ಅವನು ಸಹ ಸಮಾಜದಲ್ಲಿ ಚೂರು ಪಾರು ಮರ್ಯಾದೆ, ಗೌರವ ಸಂಪಾದಿಸಿರುತ್ತಾನೆ.ಅವನ ಬದುಕಿನ ಅಸ್ತಿತ್ವಕ್ಕೊಂದು ಸಾರ್ಥಕ ಕಂಡುಕೊಳ್ಳುತ್ತಾನೆ.

ಬಹುಶಃ ವೃತ್ತಿ ಗೌರವವಿಲ್ಲದ ಏಕಮಾತ್ರ ದಂಧೆ ಎಂದರೆ ಅದು ವೇಶ್ಯೆ ವೃತ್ತಿಯೊಂದೇ.ಆಕೆ ದೇಹವನ್ನು ಮಾರಿ ಅಷ್ಟೈಶರ್ಯವನ್ನು ಸಂಪಾದಿಸಿರಲಿ ಅದನ್ನು ನಾನು ನನ್ನ ದೇಹ ಮಾರಿ ಸಂಪಾದಿಸಿದ್ದೇನೆಂದು ಅಭಿಮಾನದಿಂದ, ಹೆಮ್ಮೆಯಿಂದ ಸಮಾಜದಲ್ಲಿ ನಿಂತು ಹೇಳುವ ಧೈರ್ಯ, ಸ್ಥೈರ್ಯ ಅವರಿಗಿರುವುದಿಲ್ಲ.ಯಾವುದೇ ಮಾನ,ಸಮ್ಮಾನ, ಬಡ್ತಿ, ಗೌರವಗಳಿಲ್ಲದ ಏಕಮಾತ್ರ ವೃತ್ತಿಯಿದು.

ವೇಶ್ಯೆ ಎಂದರೆ ಪರಮ ಪಾಪಿ,ನಿತ್ಯ ಕಳಂಕಿತೆ,ಲೋಕನಿಂದಿತೆ,ಜಾರಿಣಿ ಹೀಗೆ ನಾನಾ ಹೆಸುರುಗಳಿಂದ ಕರೆಸಿಕೊಳ್ಳುವ ಆ ಪಾಪದ ಜೀವಗಳಿಗೆ ಎಷ್ಟು ಜನ್ಮ ಕಳೆದರೂ ಆ ಕಳಂಕ ಅವರಿಂದ ದೂರವಾಗುವುದಿಲ್ಲ.

ಅಷ್ಟಕ್ಕೂ ವೇಶ್ಯೆ ಎಂದರೆ ಮೂಗು ಮುರಿಯುವ ಸಮಾಜದಲ್ಲಿ ನಾವು ಬದುಕಿದ್ದೇವೆ.ಹೌದು ಹಾಗಾದರೆ ಆಕೆ ವೇಶ್ಯೆಯಾಗಲಿಕ್ಕೆ ಭಾರತದಂತಹ ಮಡಿವಂತಿಕೆಯ ರಾಷ್ಟ್ರದಲ್ಲಿ ವೇಶ್ಯಾವಾಟಿಕೆ ಒಂದು ದಂಧೆಯಾಗಿ ,ವೃತ್ತಿಯಾಗಿ ಬೆಳೆಯಲಿಕ್ಕೆ ಕಾರಣ ಯಾರು?, ಅದಕ್ಕೆ ಅಧಿಕೃತವಾಗಿ ಪರವಾನಿಗೆ ಕೊಟ್ಟವರು ಯಾರು?

ವೇಶ್ಯಾವಾಟಿಕೆ ಎಂಬುದು ಸ್ತ್ರೀ ಕುಲಕ್ಕೆ ಅಂಟಿಕೊಂಡಿರುವ ಅಭಿಶಾಪಗಳಲ್ಲೊಂದು!ಇಂತಹ ಶಾಪದ ಕೂಪವನ್ನು ಸೃಷ್ಟಿಸಿದವರು,ಪೋಷಿಸಿದವರು ,ಪರವಾನಿಗೆ ಕೊಟ್ಟವರು ನಮ್ಮ ಸೋ ಕಾಲ್ಡ್ ಮಾರ್ಯದಸ್ಥ ಸಮಾಜ.

ಹೌದು ಬದುಕಿನಲ್ಲಿ ಯಾವುದೋ ಅಸಹಾಯಕತೆಗೋ,ಅನೀರಿಕ್ಷಿತ ಒತ್ತಡಕ್ಕೋ ಸಿಲುಕಿ ವೇಶ್ಯಾವಾಟಿಕೆ ಪ್ರಪಂಚಕ್ಕೆ ಕಾಲಿಡುವ ಸ್ತ್ರೀ ಜಗತ್ತಿಗೆ ವೇಶ್ಯೆ ಎಂದು ಚಿರಪರಿಚಿತಳಾಗುತ್ತಾಳೆ.ಆದರೆ ಆಕೆಯ ಅಸಹಾಯಕತೆಯನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳುವ ಪುರುಷ(ಕೆಲವರು) ಮಾತ್ರ ಜಗತ್ತಿನ ಮುಂದೆ ಸಭ್ಯಸ್ಥನಾಗಿ ಕಾಣಿಸಿಕೊಳ್ಳುತ್ತಾನೆ.ಸಮಾಜದ ಇಂತಹ ಕುರುಡು ಕಾನೂನಿಗೆ ನನ್ನ ಧಿಕ್ಕಾರವಿದೆ.

ಹೆಣ್ಣು ಮಕ್ಕಳನ್ನು ಮಾರಾಟ ಮಾಡುವ ದಂಧೆ ಕೋಡ್ ವರ್ಡ್ ಗಳ ಮೂಲಕ ನಡೆಯುತ್ತದೆ. ಅದಕ್ಕೆಂದೇ ದುರುಳರ ವರ್ಗ ಹುಟ್ಟಿಕೊಂಡಿದೆ.ಕಿತ್ತು ತಿನ್ನುವ ಬಡತನ, ಬದುಕಿನ ಅಸಹಾಯಕ ಸ್ಥಿತಿ, ಕಾಮುಕ ಕಣ್ಣಿನ ಕೀಚಕರ ದುರಾಸೆಗೆ ಬಲಿಯಾಗುವ ಹೆಣ್ಣು ಮಕ್ಕಳು ಮುಂದೆ ಕಾಮಾಟಿಪುರಂನ ವೇಶ್ಯಾವಾಟಿಕೆ ಅಡ್ಡೆಗಳಲ್ಲಿ ಇನ್ನೊಬ್ಬರ ದೈಹಿಕ‌ ಸುಖದ ಸರಕಾಗುತ್ತಾಳೆ‌. ಮುಂಬೈ ನ ರೆಡ್ ಲೈಟ್ ಏರಿಯಾ (ಕಾಮಾಟಿಪುರಂ) ಹೆಣ್ಣು ಮಕ್ಕಳ ಪಾಲಿಗದು.

ಲೇಖಕಿ | ಮೈತ್ರಾವತಿ ವಿ. ಐರಣಿ, ಚಿಕ್ಕಬೂದಿಹಾಳು, ದಾವಣಗೆರೆ

ರೌರವ ನರಕ ಇಡೀ ಜೀವ ಹಿಡಿದುಕೊಂಡು ಪರರ ಸುಖಕ್ಕಾಗಿ ಮನಸ್ಸು ಮತ್ತು ದೇಹಗಳ ನಡುವೆ ನಿತ್ಯವೂ ಹೋರಾಟ ನಡೆಸುತ್ತಿರುತ್ತಾಳೆ.ಏಕೆಂದರೆ ಪ್ರತಿಯೊಂದು ಹೆಣ್ಣಿಗೂ ಅವಳದೇ ಬದುಕಿನ ಕನಸಿರುತ್ತದೆ.ಅದಕ್ಕಾಗಿ ಹಗಲಿರುಳು ಶ್ರಮಿಸುತ್ತಾಳೆ.ಆರ್ಥಿಕ ಬಿಕ್ಕಟ್ಟು, ಸಮಾಜದ ದೂಷಣೆ,ಬದುಕಿನ ಅಸಹಾಯಕತೆ ಎದುರಾದಾಗ ಆಕೆ ಯಾರದ್ದೋ ಸಹಾಯದ ಬಾಗಿಲಿಗೆ ಬಂದು ನಿಲ್ಲುತ್ತಾಳೆ.ಹಾಗಂತ ಅವಳಿಗೆ ನಿಸ್ವಾರ್ಥ ಮನಸ್ಸಿನಿಂದ, ಒಳ್ಳೆಯ ದೃಷ್ಟಿಯಿಂದ ಸಹಾಯ ಮಾಡೋ ಸಭ್ಯಸ್ಥ ಮಂದಿ ನಮ್ಮ ನಡುವೆ ಎಷ್ಟಿದ್ದಾರೆ.

ಒಬ್ಬ ಖ್ಯಾತ ಸೀರಿಯಲ್ ನಟಿಯವರು ಕಣ್ಣಾರೆ ಕಂಡ ಘಟನೆಯನ್ನು ಇಲ್ಲಿ ಪ್ರಸ್ತುತ ಪಡಿಸಲಿಚ್ಛಿಸುತ್ತೇನೆ.ಲಾಲ್ ಬಾಗ್ ಹತ್ತಿರ ಒಬ್ಬ ತಾಯಿ ತನ್ನ ಮಗುವಿಗೆ ಹಾಲು ಕುಡಿಸಲು ಹಣ ಅಂತ ಬೀದೀಲಿ ನಿಂತು ಬರುವವರ ಹತ್ತಿರ ಹಣ ಕೇಳ್ತಾಳೆ.ಯಾರು ಬಿಡಿಗಾಸು ಬಿಚ್ಛೋದಿಲ್ಲ.ಒಬ್ಬ ಬಂದು ನಿನಗೆ ಹಣ ಕೊಡ್ತೀನಿ ನನ್ನ ಜೊತೆ ಬಾ ಎಂದು ಕರೆದುಕೊಂಡು ಹೋಗುತ್ತಾನೆ.ತನ್ನಾಸೆಗಳನ್ನು ಪೂರೈಸಿಕೊಂಡು ಹಣ ಬಿಸಾಕಿ ಹೋಗುತ್ತಾನೆ.

ಹಾಗಾದರೆ ಇಲ್ಲಿ ಮಗುವಿನ ಹಸಿವಿನ ತಪ್ಪಾ? ಆ ತಾಯಿ ತೆಗೆದುಕೊಂಡ ನಿರ್ಧಾರದ ತಪ್ಪಾ? ಅಥವಾ ಆಕೆಯ ಅಸಾಹಯಕತೆಯನ್ನು ಬಳಸಿಕೊಂಡ ಆ ಆಗುತಂಕನ ತಪ್ಪಾ? ಎಲ್ಲಕ್ಕೂ ಮೌನವೋಂದೇ ಉತ್ತರ. ಈ ತರಹದ.ಸಣ್ಣ ಸಣ್ಣ ಘಟನೆಗಳಿಂದ ರೋಸಿ ಹೋದ ಹೆಣ್ಣು ಮಕ್ಕಳು ಮುಂದೆ ವೇಶ್ಯಾವಾಟಿಕೆಯನ್ನೇ ವೃತ್ತಿ ಮಾಡಿಕೊಳ್ಳುತ್ತಾರೆ. ಕಾಮಾಟಿಪುರಂನ ಗಲ್ಲಿ ಗಲ್ಲಿಗಳಲ್ಲಿ ಇಂತಹುದೇ ಅನೇಕ ಹೆಣ್ಣು ಮಕ್ಕಳು ಕಾಣ ಸಿಗುತ್ತಾರೆ.

ಇನ್ನೂ ವಿಪರ್ಯಾಸ ಎಂದರೆ ಅಂದರೆ ಎಷ್ಟೋ ದೇಶಗಳಲ್ಲಿ ಇದನ್ನು ಕಾನೂನು ಬದ್ದಗೊಳಿಸಲಾಗಿದೆ. ಇನ್ನು ಹಲವು ದೇಶಗಳಲ್ಲಿ ಅದೇ ಚಿಂತನೆಗಳು ನಡೆಯುತ್ತಿವೆ.ಭಾರತವೂ ಇದರಿಂದ ಹೊರತಾಗಿಲ್ಲ ಬಿಡಿ.ನಮ್ಮ ಸಮಾಜದ ದುರಂತ ನೋಡಿ ಸ್ತ್ರೀ ಕುಲಕ್ಕೆ ಮುಳುವಾಗಿರುವ ಈ ಶಾಪವನ್ನು ಹೊಡೆದೋಡಿಸಿ ಅವಳಿಗೂ ಒಂದು ಬದುಕು ಕಟ್ಟಿ ಕೊಡುವ ಅವಕಾಶವನ್ನು ನಾವ್ಯಾರು ಮಾಡುತ್ತಿಲ್ಲ.

ಬದಲಿಗೆ ಆಕೆಗೆ ಲೈಂಗಿಕ ಕಾರ್ಯಕರ್ತರು, ನಿತ್ಯ ಸುಮಂಗಲಿಯರು ಎಂಬ ಬಿರುದು ನೀಡಿ ಮಹಾ ಉಪಕಾರ ಮಾಡಿದ್ದೇವೆಂದು ಬೀಗುತ್ತಿದ್ದೇವೆ. ಇದು ಎಷ್ಟರಮಟ್ಟಿಗೆ ಸರಿ ಎಂಬುದನ್ನು ನಾವೇ ಆತ್ಮಾವಲೋಕನ ಮಾಡಿಕೊಳ್ಳಬೇಕು.

ವೇಶ್ಯಾವಾಟಿಕೆ ಭೂಮಿಯ ಮೇಲಿನ ಭೀಭತ್ಸ ನರಕ ಈ “ಕರಿ ಕತ್ತಲೆಯ ವ್ಯಾಪಾರದಲ್ಲಿ ವೇಶ್ಯೆ ಅಕ್ಷರಶಃ ಅಳುವ ಮಗು”
ಆಕೆಯ ನಿತ್ಯ ರೋಧನೆ ಕೇಳೋರು ಯಾರು?ತಾವು ಬಿಸಾಡುವ ಕಾಸಿಗೆ ಸೆರಗು ನೀಡುವ ಸರಕೆಂದೇ ಭಾವಿಸುವ ಆಕೆಯನ್ನು ಅನುಭವಿಸಿ ಹೋಗುವ ಮಂದಿಗೆ ಆಕೆಗೊಂದು ಸಾಂತ್ವನ ಹೇಳುವ ಸಮಯವಾದರೂ ಎಲ್ಲೀದ್ದೀತು!

ತೀಟೆ ತೀರಿದ ಬಳಿಕ..
ನೋಟು ಎಸೆದು
ಹೋಗುವ ಜನ ;
ತಿರುಗಿ ನೋಡಿದರೆ
ಅಸಹ್ಯ ಪಡುವ
ಅವರ ಮನ ;
ಆಮೇಲೆ ನಾನ್ಯಾರೊ,
ಅವರಾರೋ ;
ಅವರಿಗೋ..ತೀಟೆ ತೀರಿದರೆ ಸಾಕು ;
ನನಗೆ ಅದರಿಂದಲೇ ಬದುಕು;

ಕತ್ತಲೆಯಲಿ ಬೆತ್ತಲಾಗಿ
ಕಳೆದು ಹೋಗಿಹೆ ನಾನು ;
ಬೆತ್ತಲೆಯ ಮೈ ಹಿಂಡಿ,
ಸುಖಪಡುವವರಿಗೆ ತಿಳಿಯದು
ನನ್ನೊಳಗಿನ ನೋವು !
ಕಾಮರೂಪದಿ ಬರುವವರಲಿ
ರಾಮರೂಪವ ನೋಡಲಾದೀತೆ ?
ಸುಖ ಬಯಸಿ ಬರುವವರಲಿ
ನನ್ನ ನೋವ ಹೇಳಿಕೊಳ್ಳಲಾದೀತೆ(ರಚನೆ;ಕೃಷ್ಣ ಮೂರ್ತಿ)

ಈ ವೃತ್ತಿಯಲ್ಲಿ ತೊಡಗಿದ ಹೆಣ್ಣು ಮಗಳೊಬ್ಬಳು ಹೇಳಿದ ಒಂದು ಮಾತು ನಿಜಕ್ಕೂ ನನ್ನನ್ನು ತಲ್ಲಣಗೊಳಿಸಿತು.ಅನೀರಿಕ್ಷಿತವಾಗಿ ಈ ಪಾಪ ಕೂಪಕ್ಕೆ ನಾವು ಬಂದ್ವಿ ನಾವು ದೇಹವನ್ನು ಮಾತ್ರ ಕೊಡ್ತೀವಿ ನಮ್ಮ ಮನಸ್ಸನಲ್ಲ ಅದಿನ್ನೂ ಪರಿಶುದ್ಧವಾಗಿದೆ.ದೇಹ ಮಲಿನವಾಗಿದೆಯೇ ಹೊರತು ಮನಸ್ಸಲ್ಲ!

ನಮಗೂ ಮನಸಿದೆ ಅರಿತು ಕೈ ಹಿಡಿಯುವ ಮನುಷ್ಯ ಅದ್ಯಾರೇ ಆಗಿರಲಿ ತುಂಬು ಮನಸ್ಸಿನಿಂದ ಅವರನ್ನು ಸ್ವೀಕರಿಸಿ ಅವರಿಗೆ ಆದರ್ಶ ಸತಿಯಾಗಿ ಬದುಕುತ್ತೇನೆ.ನಮ್ಮನ್ನು ಕೀಳು ಭಾಷೆಯಿಂದ ನಿಂದಿಸುತ್ತಾರಲ್ಲ ನಮ್ಮ ಸೆರಗಿನಲ್ಲಿ ತಮ್ಮ ಕಾಮದ ಸುಖವನ್ನು ಪಡೆದುಕೊಂಡು ಹೋದವರನ್ನೇಕೇ ನೀವು ಕೀಳು ಭಾಷೆಯಿಂದ ನಿಂದಿಸುವುದಿಲ್ಲ ಎಂಬ ಪ್ರಶ್ನೆ ನನ್ನನ್ನು ಗದ್ಗಗದಿತಳನ್ನಾಗಿ ಮಾಡಿದ್ದಲ್ಲದೇ ಈ ಬರಹಕ್ಕೆ ಸ್ಪೂರ್ತಿಯನ್ನು ನೀಡಿತು. ಹಾಗೆ ಅವರ ಮೇಲೆ ಇದ್ದ ಮುಜುಗರದ ಭಾವವೊಂದು ಕರಗಿ ಗೌರವದ ಭಾವವು ಒಡಮೂಡಿತು.

ನಾನು ಈ ವೃತ್ತಿಯಲ್ಲಿ ತೊಡಗಿರುವವರಿಗೆ ಅಥವಾ ಮುಂದೆ ಅಸಹಾಯಕತೆಗೆ ಸಿಲುಕಿ ಈ ಪಾಪ ಕೂಪಕ್ಕೆ ಅನಿವಾರ್ಯವಾಗಿ ಬಿದ್ದರೆ ನೀವು ಚಿಂತಿಸಬೇಡಿ.ಅದೇ ಕಾಮಾಟಿಪುರಂನ ಬೀದಿಗಳಲ್ಲಿ ಬೆಳೆದ ಶ್ವೇತಾ ಕಟ್ಟಿ ಈಗ ನ್ಯೂಯಾರ್ಕ್ ವಿಶ್ವ ವಿದ್ಯಾಲಯದಲ್ಲಿ ಓದುತ್ತಿದ್ದಾಳೆ.ಆಕೆ ಏಕೆ ನಿಮಗೆ ಸ್ಪೂರ್ತಿಯಾಗಬಾರದು? ಅವಳು ನಿಮ್ಮ ಹಾಗೆ ಅನಿವಾರ್ಯ ಎಂದು ಕೂತಿದಿದ್ದರೆ ನ್ಯೂಯಾರ್ಕ್ ಇರಲಿ ಕಾಮಾಟಿಪುರಂ ಸಹ ದಾಟುತ್ತಿರಲಿಲ್ಲ‌.ಇವತ್ತಿನ ಕಾಲದಲ್ಲಿ ಅವಕಾಶಗಳಿಗೇನು ಕೊರತೆ ಇಲ್ಲ.

ನಿಮ್ಮ ಮನದ ಸಂಕೋಚದ ಸಂಕೋಲೆಗಳಿಂದ ಹೊರ ಬಂದರೆ ಬದುಕಿನ ಸಾವಿರ ಅವಕಾಶಗಳು ನಿಮ್ಮ ಪಾಲಿಗಿವೆ.ಯಾರದ್ದೋ ಕಾಮೋದ್ರೇಗ ತೀರಿಸಲು ನೀವೇಕೆ ಅನುಭೋಗದ ಸರಕಾಗುತ್ತೀರೀ?ನಿಮ್ಮತನವನ್ನೇ ಕಳೆದುಕೊಂಡು ನಿರ್ಭಾರ ಸ್ಥಿತಿಗೆ ತಲುಪಿ ಬದುಕುವುದು ನಿಮಗೆ ನೀವೇ ಮಾಡಿಕೊಳ್ಳುವ ಆತ್ಮವಂಚನೆ.

ಭಾರತದಂತಹ ದೇಶದಲ್ಲಿ ಪುರುಷ ಎಷ್ಟು ಜನರ ಜೊತೆ ಲೈಂಗಿಕ ಸಂಪರ್ಕ ಇಟ್ಟುಕೊಳ್ಳಬಹುದು,ಮದುವೆ, ಮೋಸ ಎಲ್ಲವನ್ನೂ ಮಾಡಬಹುದು ಏಕೆಂದರೆ ಅವನು ಏನೇ ಮಾಡಿದರೂ ಸಭ್ಯಸ್ಥ ಆದರೆ ಅದನ್ನೇ ಸ್ತ್ರೀ ಮಾಡಿದರೆ ಅವಳಿಗೆ ನೂರೆಂಟು ಕಳಂಕ,ನಿಂದನೆಗಳು ಏಕೆಂದರೆ ನಮ್ಮ ದೇಶದಲ್ಲಿ ಮಡಿವಂತಿಕೆಯ ಗೆರೆ ಇರುವುದು ಕೇವಲ ಸ್ತ್ರೀಯರಿಗಷ್ಟೇ ಪುರುಷರಿಗಲ್ಲ.

ಜೀವನ ಪೂರ್ತಿ ಯಾರಿಗೋ ಸುಖ ಕೊಡಲಿಕ್ಕೆ ಜೈವಿಕ ಗೊಂಬೆಯಾಗಿ ನೀವಿರಬೇಕಾಗಿಲ್ಲ, ಬದುಕಿನಾಚೆಗೂ ಒಂದು ಬದುಕಿದೆ ಅದಕ್ಕಾಗಿ ಹಪಹಪಿಸಿ ಇಂತಹ ಪಾಪಕೂಪದಿಂದ ದಯವಿಟ್ಟು ಹೊರಬನ್ನಿ ಹೊಸದೊಂದು ಬದುಕು ಕಟ್ಟಿಕೊಳ್ಳಿ.ಎದೆಯಲ್ಲಿ ಆತ್ಮವಿಶ್ವಾಸ, ನ್ಯಾಯವಾಗಿ ದುಡಿದು ತಿನ್ನೋ ಹಠ ಇದ್ರೆ ಏನು ಬೇಕಾದರೂ ಸಂಪಾದಿಸಬಹುದು.
“ವೇಶ್ಯಾವಾಟಿಕೆಗೆ ಬೀಳುವುದು ಶಾಪವಲ್ಲ ಅದರಿಂದ
ಹೊರಬರದೇ ಇರುವುದು ನಿಜವಾದ ಶಾಪ.”

(ಮೈತ್ರಾವತಿ ವಿ. ಐರಣಿ,ಲೇಖಕಿ.
ಚಿಕ್ಕಬೂದಿಹಾಳು, ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಭಾಮಿನಿ

ಲಾಸ್ಟ್​​ ಸ್ಟಾಪ್​​ ಬಸ್​ನಲ್ಲಿ ಸಿಕ್ಕ AGE@73..!

Published

on

  • ಆಕಾಶಪ್ರಿಯ

ಸ್ಸಿನಲ್ಲಿ ಸಿಕ್ಕವರು, ನನ್ನೀ ಬದುಕಿನ ಮಹಾಕಾವ್ಯಕ್ಕೊಂದು ಪುಟವಾದವರು, ಸ್ಮೃತಿಪಟಲಕ್ಕೊಂದು ಅಚ್ಚಳಿಯದ ನೆನಪಾದವರು ನೂರಾರು ಜೀವಗಳು. ನನ್ನದಲ್ಲದ ಊರಿನ, ನನ್ನವರಲ್ಲದ ಜನರ ನಡುವೆಯೂ ನನ್ನವರೆನಿಸಿದವರೂ, ಒಂದೊಮ್ಮೆ ಪಯಣದಲ್ಲಿ ಜೊತೆಯಾದವರು ಮನದೊಳಗೆ ಜೀವಂತವಾಗಿ ಬರಹಕ್ಕೆ ಅಕ್ಷರವಾಗಿದ್ದಾರೆ. ಅನುಭವದ ವಿಸ್ತರಣೆಗೆ ಕಾರಣರಾಗಿದ್ದಾರೆ. ಆಗಾಗ ಕಾಡಿದ್ದಾರೆ, ಅಪರೂಪಕ್ಕೆ ಕೆಲವರು ಸಂತಸದ ಕಣ್ಣಿನ ಹನಿಗಳಾಗಿದ್ದಾರೆ. ಹಲವರು ನಗುವಿನ ರುವಾರಿಗಳಾಗಿದ್ದಾರೆ. ಮತ್ತೆ ಕೆಲವರು ನನ್ನನ್ನೇ ಮೌನಿಯಾಗಿಸಿದ್ದಾರೆ. ಕೆಲವರಂತೂ ಮರೆತಷ್ಟೂ ನೆನಪಾಗಿದ್ದಾರೆ. ಅಂತದೇ ಆತ್ಮೀಯರಲ್ಲದ ಆತ್ಮೀಯರ ಜೊತೆಗಿನ ಒಂದು ಪಯಣದ ಕಥೆ ಈ ” ಲಾಸ್ಟ್​​ ಸ್ಟಾಪ್​​ ಬಸ್​ನಲ್ಲಿ ಸಿಕ್ಕ AGE@73”

ನಾನು ನನ್ನ ಗೆಳತಿ ಸರ್ಕಾರಿ ಬಸ್​ನಲ್ಲಿ ಎಲ್ಲಿಯೋ ಹೊರಟ್ಟಿದ್ದೆವು. ನಾವು ಇಳಿಯಬೇಕಾದ್ದು ಲಾಸ್ಟ್​​ ಸ್ಟಾಪ್​​ ಆಗಿದ್ದ ಕಾರಣ, ಬಸ್​​ನಲ್ಲಿ ಸೀಟ್​ ಸಿಕ್ಕ ತಕ್ಷಣ ಖುಷಿಯಿಂದ ಕುತ್ಕೊಂಡೆವು. ನಂತರ ನೆಕ್ಸ್ಟ್​​ ಸ್ಟಾಪ್​​ನಲ್ಲಿ ಒಬ್ರು ಅಂಕಲ್​ ಹತ್ತಿದ್ರು. ಸೀದಾ ನಮ್ಮ ಸೀಟ್​​ ಹತ್ರ ಬಂದು ಇದು ಸೀನಿಯರ್​ ಸಿಟಿಜನ್​ ಸೀಟ್​ ಏಳಿ ಮೇಲೆ ಅಂತ ಆರ್ಡರ್​​ ಮಾಡಿದ್ರು.

ಸರಿ ಅಂತ ಪಕ್ಕದಲ್ಲಿ ಕೂತಿದ್ದ ಫ್ರೆಂಡ್​​​​ ಸೀಟ್​​ ಬಿಟ್ಟು ನಿಂತ್ಕೊಂಡ್ರು. ಆ ಅಂಕಲ್​​ಗೆ ಮನಸ್ಸಲ್ಲೇ ಇಬ್ರೂ ಬೈಕೊಂಡಿದ್ದೇನು ಸುಳ್ಳಲ್ಲ. ಯಾಕಂದ್ರೆ ಜೊತೆಗೆ ಮಾತಾಡ್ತಾ ಆರಾಮಾಗಿ ಹೋಗ್ತಿದ್ವು, ಇವ್ರು ಬಂದು ಎದ್ದೇಳಿಸಿದ್ರಲ್ಲ ಅಂತ ಸ್ವಲ್ಪ ಕೋಪ ಬೇಜಾರು ಎರಡು ಒಟ್ಟೊಟ್ಟಿಗೆ ಬಂತು. ಸಾಮಾನ್ಯವಾಗಿ ಬಸ್​​ ಫ್ರೆಂಟ್​​ ಅಲ್ಲಿ ಮಹಿಳೆಯರಿಗೆ ಹಿಂಬದಿ ಗಂಡಸರಿಗೆ ಸೀಟ್ಸ್​​ ಇರತ್ತೆ, ಬಟ್​​ ಇವ್ರು ಯಾಕೆ ಫ್ರೆಂಟ್​ ಸೀಟ್​​ ಗೆ ಬಂದು ಸೀಟ್​ ಬಿಡುಸ್ಕೊಂಡ್ರು….. ಘಾಟಿ ಮನುಷ್ಯ ಅನಿಸುತ್ತೆ!, ವಾದ ಬೇಡ ಅಂತ ಸುಮ್ಮನಾದ್ವಿ.

ಬಸ್​​ ಸ್ವಲ್ಪ ದೂರ ಕ್ರಮಿಸಿತ್ತು. ಒಬ್ಳೆ ಸುಮ್ನೆ ಕೂರೋಕೆ ಬೇಜಾರು, ಸೋ ಕಿವಿಗೆ ಇಯರ್​​ ಫೋನ್​​ ಸಿಕ್ಕಿಸಿ ಹಾಡು ಕೇಳ್ತಿದ್ದೆ. ಬಸ್​​ ಮುಂದೆ ಸಾಗ್ತಿತ್ತು, ನಿಧಾನವಾಗಿ ಅಂಕಲ್​​ ಮಾತು ಶುರುಮಾಡಿದ್ರು. ಇದು ಸೀನಿಯರ್​ ಸಿಟಿಜನ್​ ಸೀಟ್​​, ಯಾರು ಇಲ್ಲ ಅಂದ್ರೆ ಕುತ್ಕೋಳಿ… ಆದ್ರೆ ಯಾರಾದ್ರೂ ಸೀನಿಯರ್​ ಸಿಟಿಜನ್​ ಬಂದ್ರೆ ಅವ್ರಿಗೆ ಸೀಟ್​ ಬಿಟ್​ಕೊಡ್ಬೇಕು. ಬಸ್​​ನವ್ರು ಕೂಡ ಸರಿಯಾಗಿ ಬೋರ್ಡ್​​ ಹಾಕಿಲ್ಲ ರೂಲ್ಸ್​​ ಫಾಲೋ ಮಾಡಲ್ಲ, ರೂಲ್ಸ್​​ಬ್ರೇಕ್​​ ಮಾಡಿದ್ರೆ 5 ಸಾವಿರ ದಂಡ ಬೀಳುತ್ತೆ ಗೊತ್ತಾ ಅಂತ ಹೇಳುದ್ರು. ನಾನು ಹೂ ಗುಡುತ್ತಿದ್ದೆ. ಯಾಕೋ ಅವ್ರು ಮಾತಾಡುವಾಗ ನಾನು ಇಯರ್​​ ಫೋನ್​ ಹಾಕೋಳೋದು ಸಭ್ಯತೆ ಅಲ್ಲ ಅಂತ ನನ್ ಮನ್ಸು ನನ್ನೇ ಗುರಾಯುಸ್ತು. ಇಯರ್​ ಫೋನ್​ ತೆಗ್ದೆ. ನಾನು ಅಂಕಲ್​​ ಜೊತೆ ಮಾತಿಗಿಳಿದೆ.

ನನ್​​ ಬಗ್ಗೆ ಕೇಳಿದ್ರು ಹೇಳ್ದೆ. ಆಮೇಲೆ ಅವ್ರು ಮಾತಡಿದ್ರು. ಅದ್ಯಾಕೋ ಹಿರಿಜೀವಗಳು ಮನಸ್ಸಿಗೆ ತುಂಬಾ ಹತ್ರ ಆಗ್ತಾರೆ ನಂಗೆ. ಹಿರಿಯರು ಮಾತಾಡುವಾಗ ಮನಸ್ಸಿಟ್ಟು ಕೇಳ್ಬೇಕು ಅನಿಸುತ್ತೆ. ನಿಮಗೆ ಗೊತ್ತಾ ಅವ್ರು ಅಂಕಲ್​ ಅಂತ ಹೇಳ್ದೆ ಅಲ್ವಾ ಆಕ್ಚುಲಿ ಅವರ ವಯಸ್ಸು 73 ! ಹೆಸರು ಸೂರ್ಯನಾರಾಯಣ. ಎಕ್ಸ್​​ ಗವರ್ನಮೆಂಟ್​ ಎಂಪ್ಲೋಯ್ ​. ಅಗ್ರಿಕಲ್ಚರ್​​ ಡಿಪಾರ್ಟ್​​ಮೆಂಟ್​​ ನಲ್ಲಿ ಸೇವೆ ಸಲ್ಲಿಸಿ ಈಗ ರಿಟೇರ್ಡ್​ ಆಗಿದ್ದೀನಿ ಬೇಟಾ ಅಂದ್ರು. ನಾನು ಹೋ ಹೌದ ಅಂದೆ.

ನಂತ್ರ ಅವ್ರೇ ಮಾತು ಮುಂದುವರೆಸಿ ನಂಗೆ ಲಾಯರ್​​ ಆಗ್ಬೇಕು ಅಂತ ತುಂಬಾ ಆಸೆ ಇತ್ತು ಬೇಟಾ ನಾನು ಓದೋ ಟೈಮ್​​ನಲ್ಲಿ ಎಲ್ಲರ ಹತ್ರ ಹೇಳ್ಕೊಂಡು ಬರ್ತಿದೆ ನಾನ್​​ ಲಾಯರ್​ ಆಗ್ತೀನಿ ಅಂತ …..ಹಾಗ್​​ ಹೇಳುವಾಗ ಅವ್ರ ಮುಖದಲ್ಲಿ ಆ ಹುಮ್ಮಸ್ಸು ನೋಡ್ಬೇಕಿತ್ತು ಒಂದು ಕ್ಷಣ ಸ್ಕೂಲ್​ ಡೇಸ್​​ ಹಾಗೇ ಅವ್ರ ಕಣ್ಮುಂದೆ ಬಂತು ಅನಿಸುತ್ತೆ..ನಾನು ಕೇಳ್ದೇ ಯಾಕೆ ವಕೀಲರೇ ಆಗ್ಬೇಕು ಅನ್ಕೊಂಡ್ರಿ ಅಂತ.. ಅದುಕ್ಕೆ ಅವ್ರು ನನಗೆ ಅನ್ಯಾಯ ಸಹಿಸೋಕಾಗಲ್ಲ, ನಾನು ಲಾಯರ್​​ ಆಗಿ ನ್ಯಾಯ ಕೊಡುಸ್​ಬೇಕು ಅನ್ನೋದೆ ನನ್ನ ಗುರಿಯಾಗಿತ್ತು ಅದ್ಕೆ ಅಂದ್ರು. ಆಮೇಲೆ ಏನ್​ ಮಾಡೋದು ಬೇಟಾ ಅನ್ಕೋಳೋದೆ ಒಂದು ಆಗೋದೆ ಇನ್ನೊಂದು ಅಂದ್ರು. ನಾನು ಹೌದು ಅದಂತೂ ನಿಜ ಬಿಡಿ ಅಂದೆ.

ನಾನು ಈ ಮುತ್ತಿನ ನಗರಿಗೆ ಕಾಲಿಟ್ಟು 50 ವರ್ಷ ಕಳೆದಿದೆ. ನಾನ್​​ ಇಲ್ಲಿಗೆ ಬಂದಾಗ ಲಕ್ಷದಷ್ಟಿದ್ದ ಜನಸಂಖ್ಯೆ ಈಗ ನೋಡು ಕೋಟಿ ದಾಟಿದೆ ಅಂದ್ರು …. ಎಲ್ಲೇ ಹೋದ್ರು ಟ್ರಾಫಿಕ್​ ಕಿರಿಕಿರಿ ಕಷ್ಟ ಬೇಟಾ ಅಂದ್ರು. ಈಗ ಗರ್ವನ್ಮೆಂಟ್​ ಜಾಬ್​ ತಗೋಳೋದು ನಮ್ಮ ಕಾಲದಷ್ಟು ಸುಲಭವಲ್ಲ ಅಂದ್ರು. ಹೌದು ಅಂಕಲ್​​ ಜನಸಂಖ್ಯೆ ಜಾಸ್ತಿಯಾಗಿ, ಕಾಂಪಿಟೇಶನ್​​ ಜಾಸ್ತಿ ಆಗಿದೆ ಏನ್​​ ಮಾಡೋಕಾಗಲ್ಲ ಅಂದೆ.

ಹೀಗೆ ಮಾತು ಮುಂದುವರಿತಾ ಫ್ಯಾಮಿಲಿ ಬಗ್ಗೆ ಕೇಳಿದ್ರು. ಹೇಳ್ದೆ. ತಕ್ಷಣ ಆ ಅಂಕಲ್​​ ನಂಗೆ ಅಪ್ಪ ಅಮ್ಮ ಇಬ್ರೂ ಇಲ್ಲ ಬೇಟಾ.. ನಂಗೆ 14 ನೇ ವಯಸ್ಸಿದ್ದಾಗಲೇ ತಂದೆ ತೀರ್ಕೊಂಡ್ರು, ಆಮೇಲೆ 36 ನೇ ವಯಸ್ಸಲ್ಲಿ ತಾಯಿ ತೀರ್ಕೊಂಡ್ರು. ಈಗಲೂ ಅಮ್ಮ ನೆನೆದಾಗೆಲ್ಲಾ ಕಣ್ಣಲ್ಲಿ ನೀರ್​​ ಬರುತ್ತೆ ಬೇಟಾ ಅಂದಾಗ ಅವ್ರ ಕಣ್ಣಾಲಿ ಒದ್ದೆಯಾಗಿತ್ತು. ಯಾವತ್ತೂ ತಂದೆ-ತಾಯಿನಾ ನೋಯಿಸಬಾರದು ಬೇಟಾ ನಮಗೋಸ್ಕರ ಅವ್ರು ಎಷ್ಟೆಲ್ಲಾ ಕಷ್ಟ ಪಡ್ತಾರೆ ಗೊತ್ತಾ ಅಂದ್ರು. ನಾನು ಹೂ ಅಂಕಲ್​ ಅಂದೆ.

ನನ್​​ ಹೆಂಡ್ತಿ ಕೂಡ 56 ವರ್ಷ ಇರುವಾಗ ನನ್ನ ಒಂಟಿ ಮಾಡಿ ಮಧ್ಯರಾತ್ರಿನೇ ಬಿಟ್ಟು ಹೊರಟೋದ್ಲು. ಅವಳಿರ್​ಬೇಕಿತ್ತು ಬೇಟಾ. ಅಪ್ಪ -ಅಮ್ಮ ದೇವ್ರಗಿಂತ ಮಿಗಿಲು. ಅವ್ರನ್ನ ಬಿಟ್ರೆ ಹೆಂಡ್ತಿನೇ ಗ್ರೇಟ್​. ಗಂಡ ,ಮನೆ, ಮಕ್ಳು ಸಂಸಾರ ಎಲ್ಲಾ ನೋಡ್ಕೋತಾಳೆ . ಅವಳ ತರ ನಾವ್​​ ಕೆಲ್ಸ್ ಮಾಡೋಕಾಗಲ್ಲ, ಪ್ರತಿದಿನ ಅವಳ ನೆನಪು ಬರುತ್ತೆ ಬೇಟಾ ಅವ್ಳು ಮಧ್ಯರಾತ್ರಿ 12 : 30 ಗೆ ಹಾರ್ಟ್​​ ಅಟ್ಯಾಕ್​ ಆಗಿ ಹೋಗಿಬಿಟ್ಲು ಅಂತ ಅತ್ರು. ಈ ಇಳಿವಯಸ್ಸಲ್ಲೂ ಜೊತೆಗೆ ಬದುಕಿ ಅಗಲಿದ ಜೀವ ನೆನೆದು ಅವ್ರು ಕಣ್ಣೀರಿಟ್ಟಾಗ ಏನ್​​ ಹೇಳ್ಬೇಕು ಅಂತಾನೇ ಗೊತ್ತಾಗಲಿಲ್ಲ ನಂಗೆ.

ನಾನು ಮಕ್ಳು ಬಗ್ಗೆ ಕೇಳ್ದೆ ಇಬ್ರು ಮಕ್ಳು ಒಬ್ಲು ಮಗಳು , ಒಬ್ಬ ಮಗ. ಮದುವೆ ಆಗಿದೆ ನಾನು ಮಗನ ಮನೇಲಿ ಇದ್ದೀನಿ ಅಂದ್ರು. ಆದ್ರೆ ರೀಸೆಂಟ್​ ಆಗಿ ಅಳಿಯ ಕೂಡ ತೀರ್ಕೊಬಿಟ್ಟಾ ಅಂದ್ರು. ಹೌದಾ ಏನಾಗಿತ್ತು ಅಂದೆ ನಿಂಗೆ ಹೇಳ್ಬಾರ್ದು ಆದ್ರೂ ಹೇಳ್ತೀನಿ ಬೇಟಾ… ಅವ್ನು ಐಟಿ ಉದ್ಯೋಗಿ ಆದ್ರೂ ದಿನಾ ಕುಡಿತಾ ಇದ್ದ. ಲಿವರ್ ಡ್ಯಾಮೇಜ್​ ಆಗಿತ್ತು. 2 ತಿಂಗಳ ಹಿಂದೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಟ್ರೀಟ್​​ಮೆಂಟ್​ ಕೊಡುಸ್ತೆ ಡಾಕ್ಟರ್​ ಇನ್ನೊಂದು ಆಪರೇಶನ್​ ಆಗ್ಬೇಕು ಅಂದ್ರು 40 ಲಕ್ಷ ಖರ್ಚಾಗುತ್ತೆ ಅಂದ್ರು. ನನ್​ ಪೆನ್ಷನ್​ ದುಡ್ಡು ಅದು ಇದು ಎಲ್ಲಾ ಸೇರಿ ಆಪರೇಶನ್​ ಮಾಡಿಸೋಕೆ ರೆಡಿ ಮಾಡ್ಕೋತ್ತಿದ್ದೊ.

ಆದ್ರೆ ಅಷ್ಟರಲ್ಲಿ ಅವನು ಸತ್ತು ಹೋದ ಅಂತ ಬೇಜಾರಲ್ಲಿ ಹೇಳಿದ್ರು.. ನನ್​ ಮಗಳು ನೋಡಿದ್ರೆ, ಮೊಮ್ಮಕ್ಕಳನ್ನು ನೋಡಿದ್ರೆ ಪಾಪ ಅನಿಸುತ್ತೆ ಬೇಟಾ, ನಾವೆಷ್ಟೇ ಪ್ರೀತಿ ತೋರಿಸಿದ್ರೂ ಮಗಳಿಗೆ ಗಂಡನ ಪ್ರೀತಿ ಕೊಟ್ಟಂಗೆ ಆಗುತ್ತಾ, ಮಕ್ಕಳಿಗೆ ತಂದೆಯ ಪ್ರೀತಿ ತುಂಬೋಕಾಗಲ್ಲ, ನೆನೆಸ್ಕೊಂಡ್ರೆ ತುಂಬಾ ಬೇಜಾರಾಗುತ್ತೆ ಬೇಟಾ ಅಂದ್ರು. ಯಾರೂ ಇಂಥ ಕೆಲ್ಸ ಮಾಡ್ಬಾರ್ದು, ಕುಡಿಬಾರದು,ಹೆಂಡ್ತಿ ಮಕ್ಕಳ ಬಗ್ಗೆ ಯೋಚ್ನೆ ಮಾಡ್ಬೇಕು ಅಂತ ಅವ್ರು ಹೇಳುವಾಗ ನಿಜ ಅದ್ರಿಂದ ಅವ್ರ ಮಗಳು, ಫ್ಯಾಮಿಲಿ ಅದೆಷ್ಟು ನೋವು ಅನುಭವಿಸ್ತಿದ್ದಾರೆ ಅನ್ನೋದು ಅವ್ರ ಮಾತುಗಳಲ್ಲೇ ಗೊತ್ತಾಗ್ತಿತ್ತು.

ಇನ್ನು ಮಗ ಖಾಸಗಿ ಕಂಪೆನಿ ಉದ್ಯೋಗಿ, ಬ್ಯುಸಿ, ಇನ್ನು ಮೊಮ್ಮಕ್ಕಳು ಸ್ಕೂಲು, ಕಾಲೇಜು… ನಂಗೆ ರಿಟೇರ್ಡ್​​ ಆಗಿದೆ ನೋಡು ನಾನು ಫ್ರೀ….ನಾನೋ ದಿನಕ್ಕೆ 12 ನ್ಯೂಸ್​ ಪೇಪರ್​ ಒದ್ತೀನಿ, ಬುಕ್ಸ್​ ಒದ್ತೀನಿ, ಅದ್ರಲ್ಲೇ ಇಡೀ ದಿನ ಕಳೀತೀನಿ, ತಿಂಗಳಿಗೆ 2000 ದಷ್ಟು ಬರೀ ಪೇಪರ್​,ಬುಕ್​ ಬಿಲ್ಲೇ ಆಗುತ್ತೆ, ನ್ಯೂಸ್​​ ಪೇಪರ್​​ ಓದದೇ ಹೋದ್ರೆ ನಂಗ್​ ಸಮಾಧಾನನೇ ಆಗಲ್ಲ ಬೇಟಾ ಅಂದ್ರು.

ಅದ್ಕೆ ನಾನು ಎಷ್ಟೇ ಆದ್ರೂ ಲಾಯರ್​​ ಆಗಬೇಕು ಅನ್ಕೋಂಡಿದ್ದೋರಲ್ವೆ ನೀವು ಅಂತ ಛೇಡಿಸಿದೆ, ಅವ್ರೂ ನಕ್ಕು. ಹೌದು ಬೇಟಾ ನಾನ್​​ ಲಾಯರ್​​ ಆಗ್ಬೇಕಿತ್ತು. ಆಗಿದ್ದಿದ್ರೆ ಈಗ ಹೈಕೋರ್ಟ್​​ ಅಲ್ಲಿ ಇರ್ತಾ ಇದ್ದೆ ಅಂತ ಮನಸಾರೆ ನಕ್ರು. ಓದ್​ಬೇಕು ಬೇಟಾ , ಪ್ರಪಂಚದ ಆಗು-ಹೋಗುಗಳನ್ನು ತಿಳ್ಕೋಬೇಕು, ಓದಿಲ್ಲಾ ಅಂದ್ರೆ ಪ್ರಾಣಿಗಳ ತರ ಆಗಿಬಿಡ್ತೀವಿ ಅವಕ್ಕೂ ನಮಗೂ ಏನೂ ವ್ಯತ್ಯಾಸ ಇರಲ್ಲ ಅಂದ್ರು ತೆಲುಗು,ಇಂಗ್ಲಿಷ್​​,ಹಿಂದಿಯನ್ನು ನಿರರ್ಗಳವಾಗಿ ಮಾತಾಡಬಲ್ಲ ಅವ್ರು 73 ರ ಹರೆಯದ ತಾತ ಅಲ್ಲ ಅಂಕಲ್!​

ಇನ್ನು ನಿಮ್ಮ ಜೊತೆ ಹುಟ್ಟಿದವ್ರು ಯಾರಿಲ್ವಾ ಅಂತ ಕೇಳ್ದೆ. ಒಮ್ಮೆಲೆ ಅವರ ಮುಖ ಅರಳಿತು . ನಾವ್​​ 9 ಜನ ಮಕ್ಕಳು, ಎಲ್ರೂ ಇದ್ದೀವಿ. ಆಂಧ್ರ, ವಿಜಯವಾಡ, ಸಿಂಗಾಪುರ್​, ಹೀಗೆ ಎಲ್ರೂ ಒಂದೊಂದು ಕಡೆ ಇದ್ದೀವಿ, ವರ್ಷಕ್ಕೆ ಒಂದು ಸಲ ತಂದೆ-ತಾಯಿ ಕಾರ್ಯ ಮಾಡುವಾಗ ಎಲ್ರೂ ಒಂದುಕಡೆ ಸೇರ್ತೀವಿ ಅಂದ್ರು.

ಇಷ್ಟೆಲ್ಲಾ ಮಾತಾಡೋ ಅಷ್ಟರಲ್ಲಿ ಅವ್ರು ಇಳಿಯುವ ಸ್ಟಾಪ್​ ಬಂತು. ಹೋಗುವಾಗ ಬೈ ಬೇಟಾ ಖುಷ್​ ರಹೋ, ದಿನ ಮಾತಾಡೋಕೆ ಯಾರೂ ಸಿಗಲ್ಲ, ಹೀಗೆ ಯಾರಾದ್ರೂ ಸಿಕ್ಕಿದ್ರೆ ​ಜರ್ನಿ ಮಾಡಿದ್ದೇ ಗೊತ್ತಾಗಲ್ಲ, ಒಬ್ರೆ ಇದ್ರಂತೂ ಇನ್ನೂ ಸ್ಟಾಪ್​ ಬಂದಿಲ್ವಾ ಅನಸುತ್ತೆ. ಈಗ ನೋಡು ನಾವಿಬ್ರೂ ಮಾತಾಡ್ಕೊಂಡು ಬಂದಿದ್ಕೆ ಸ್ಟಾಪ್​ ಬಂದಿದ್ದೆ ಗೊತ್ತಾಗಿಲ್ಲ ಅಂತ ನಕ್ರು. ಆಗ ನಾನು, ಬಸ್​​ ಹತ್ತುವಾಗ ಸಿಟ್ಟು ​​ ಮಾಡ್ಕೊಂಡು, ವಾದ ಮಾಡಿ ನಮ್​​ ಜೊತೆ ಸೀಟ್​​ ಬಿಡುಸ್ಕೊಂಡು ಕೂತ ಅದೇ ಸೂರ್ಯನಾರಾಯಣ್​ ಅಂಕಲ್​ ಬಸ್​​ ಇಳಿವಾಗ ಖುಷಿ-ಖುಷಿಯಾಗಿ ಇಳಿದಿದ್ದು ಕಂಡು ಒಂದು ಕ್ಷಣ ಖುಷಿಯಿಂದ ಮೌನಿಯಾದೆ.

ಆಗ ಅನಿಸಿದ್ದು, ಒಬ್ಬ ವ್ಯಕ್ತಿ ಅವನ ವ್ಯಕ್ತಿತ್ವನಾ ಒಂದೇ ಸಲ ಅಳೆಯೋಕೆ ಆಗಲ್ಲ. ಬರೀ ಯಾವುದೋ ಒಂದು ಘಟನೆಯಿಂದ ಒಂದು ಮಾತಿಂದ ಅವರು ಸರಿ ಇಲ್ಲ, ಹಾಗೇ ಹೀಗೆ ಅಂತ ಯಾವತ್ತೂ ಜಡ್ಜ್​​ ಮಾಡ್​​ಬಾರ್ದು, ಪ್ರತಿಯೊಬ್ಬರು ಮನಸ್ಸಲ್ಲೂ ಅವ್ರದೇ ಆದ ನೋವಿರುತ್ತೆ. ಮನದಾಳದ ಮಾತುಗಳನ್ನು ಕೇಳೋ ಯಾವುದೋ ಒಂದು ಜೀವನಾ ಆ ಕಂಗಳು ಹುಡುಕ್ತಿರುತ್ತೆ. ಒಂದು ವೇಳೆ ನಿಮಗೆ ಯಾವುದಾದರೂ ಹಿರಿಜೀವದ ಜೀವನದ ಅನುಭವನಾ, ಅಥವಾ ಅವ್ರ ನೋವನ್ನ ಕೇಳಿಸಿಕೊಳ್ಳೋ ಅವಕಾಶ ಸಿಕ್ರೆ ಅದಕ್ಕೆ ನೀವೂ ಕಿವಿಯಾಗಿ . ಯಾಕಂದ್ರೆ 73 ವರ್ಷಗಳ ತುಂಬು ಜೀವನ ನಡೆಸಿರೋರು ಅವ್ರಷ್ಟು ವಯಸ್ಸಿನವರೆಗೂ ಖಂಡಿತ ನಾವು ಬದ್ಕೋಕ್ಕಾಗಲ್ಲ, ಹಂಗಿದೆ ನಮ್​​ ಜೀವಿತಾವಧಿ ದರ , ಅಂತದ್ದರಲ್ಲಿ ಇಂತವರ ಅನುಭವಗಳೆ ನಮಗೆ ಮಾರ್ಗದರ್ಶನ ಆಗ್ಬೋದು, ಸ್ಫೂರ್ತಿ ಆಗಬಹುದು.

ಅಂದಹಾಗೇ ಅಂಕಲ್​​ ಒಟ್ಟಿಗಿನ ಇಷ್ಟೂ ಸಂಭಾಷಣೆ ನಡೆದಿದ್ದು, ಹಿಂದಿಯಲ್ಲಿ. ಆ ಭಾಷೇನೆ ನನಗೆ ಒಂದು ವಿಭಿನ್ನ ವ್ಯಕ್ತಿತ್ವದ ಪರಿಚಯ ಆಗೋಕೆ, ಬದುಕಿನ ಒಂದು ಅವಿಸ್ಮರಣೀಯ ಅನುಭವ ಆಗೋಕೆ ಕಾರಣ ಆಗಿದ್ದು, ನನ್ನ ನೆನಪಿನ ಬುತ್ತಿಗೊಂದು ಹೊಸ ವ್ಯಕ್ತಿಯ ಸೇರ್ಪಡೆಯಾಗುವಂತೆ ಮಾಡಿದ್ದು. ಒಂದು ವೇಳೆ ಯಾವುದೋ ಒಂದೇ ಭಾಷೆಯ ವ್ಯಾಮೋಹಕ್ಕೆ ಒಳಗಾಗಿ ಬೇರೆ ಭಾಷೆಗಳನ್ನ ತಿರಸ್ಕಾರ ಮಾಡಿದ್ರೆ ಬಹುಶಃ ಬದುಕಲ್ಲಿ ಏನನ್ನೋ ಮಿಸ್​​ ಮಾಡ್ಕೋತ್ತಿವಿ ಅನಿಸುತ್ತೆ. ಹಾಗಾಗಿ ನಂಗೆ ಯಾವುದೇ ಬೇರೆ ಭಾಷೆ ಕಲಿಕೆ ಬಗ್ಗೆ ಎಂದಿಗೂ ತಕರಾರಿಲ್ಲ. ಸೋ ಯಾರ ಮುಲಾಜಿಲ್ಲದೇ ಹೇಳ್ತೀನಿ, ಇಂಗ್ಲಿಷ್​​, ಹಿಂದಿಯನ್ನೂ ಸಮಾನಾಗಿ ಪ್ರೀತಿಸುವ, ಗೌರವಿಸುವ ನಾನೊಬ್ಬಳು ಅಪ್ಪಟ ಕನ್ನಡತಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 hours ago

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ದಿನದ ಸುದ್ದಿ1 day ago

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ...

ದಿನದ ಸುದ್ದಿ3 days ago

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ...

ದಿನದ ಸುದ್ದಿ7 days ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ1 week ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ1 week ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ1 week ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ2 weeks ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ2 weeks ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ2 weeks ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

Trending