ಸಿನಿ ಸುದ್ದಿ
ಹಾಲಿವುಡ್ ನಟಿ ‘ಲುಪಿತಾ’ಅಂತರಂಗದ ಮಾತುಗಳು : ಮಿಸ್ ಮಾಡ್ದೆ ಓದಿ ; ಅಭಿಪ್ರಾಯ ತಿಳಿಸಿ
- ಹಾಲಿವುಡ್ ನಟಿ ಲುಪಿತಾ ನ್ಯೋಂಗೊಗೆ ಮೊನ್ನೆ ಆಸ್ಕರ್ ಪ್ರಶಸ್ತಿ ಲಭಿಸಿದೆ. ಸ್ಟೀವ್ ಮಕೀನ್ ನಿರ್ದೇಶನದ “12 Years a Slave ಚಿತ್ರದಲ್ಲಿ ಪಾಟ್ಸಿ ಪಾತ್ರದಲ್ಲಿ ಅತ್ಯದ್ಭುತವಾಗಿ ನಟಿಸಿದ ಈಕೆಗೆ ’ಅತ್ಯುತ್ತಮ ಪೋಷಕನಟಿ’ ಪ್ರಶಸ್ತಿ ಲಭಿಸಿದೆ. ಈ ಕೀನ್ಯಾ ಮೂಲದ ಪೋಷಕರನ್ನು ಹೊಂದಿರುವ ಮೆಕ್ಸಿಕನ್ ಕಪ್ಪು ವರ್ಣದ ತಾರೆಗೆ ಆಸ್ಕರ್ ಪ್ರಶಸ್ತಿ ಲಭಿಸುವ ಮುನ್ನ ‘ಎಸೆನ್ಸ್ ಮ್ಯಾಗಜೀನ್’ ಎಂಬ ಪ್ರಸಿದ್ಧ ಸಿನಿಮಾ ಪತ್ರಿಕೆ ’ಬ್ಲಾಕ್ ವಿಮೆನ್ ಇನ್ ಹಾಲಿವುಡ್’ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಆ ಪ್ರಶಸ್ತಿ ಆಕೆ ಸ್ವೀಕರಿಸುವಾಗ ಮಾಡಿದ ಭಾಷಣದಲ್ಲಿ ತನ್ನ ಅಂತರಂಗದ ಸೌಂದರ್ಯವನ್ನು ಬಿಚ್ಚಿಟ್ಟಳು. ಅವಳಾಡಿದ ಮಾತುಗಳನ್ನು ಅನುವಾದಿಸಿ ಬರಹ ರೂಪದಲ್ಲಿರಿಸಿದ್ದೇನೆ.
-ಅನುವಾದ ಮತ್ತು ಬರಹ ರೂಪ : ಹರ್ಷಕುಮಾರ್ ಕುಗ್ವೆ
“ಹುಡುಗಿಯೊಬ್ಬಳು ನನಗೆ ಬರೆದಿದ್ದ ಪತ್ರದ ಒಂದೆರಡು ಸಾಲುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ‘ಪ್ರಿಯ ಲುಪೀಟಾ, ರಾತ್ರೋ ರಾತ್ತಿ ಹಾಲಿವುಡ್ನಲ್ಲಿ ಯಶಸ್ಸು ಕಂಡ ನೀನು ಇಷ್ಟು ಕಪ್ಪಗಿರಲಿಕ್ಕೆ ನಿಜಕ್ಕೂ ಅದೃಷ್ಟ ಮಾಡಿದ್ದೆ ಅನ್ನಿಸುತ್ತ್ತಿದೆ. ನಾನು ನನ್ನ ಚರ್ಮವನ್ನು ಬೆಳ್ಳಗಾಗಿಸಲು ಫೇರ್ನೆಸ್ ಕ್ರೀಮ್ ಒಂದನ್ನು ಕೊಳ್ಳುವುದರಲ್ಲಿದ್ದೆ. ಅಷ್ಟರಲ್ಲಿ ನೀನು ಪ್ರಪಂಚದ ಭೂಪಟದಲ್ಲಿ ಕಾಣಿಸಿಕೊಂಡು ನನ್ನನ್ನು ಉಳಿಸಿದೆ”.
ಆ ಹುಡುಗಿ ಬರೆದ ಪತ್ರದ ಈ ಸಾಲುಗಳನ್ನು ಓದಿದ ನನ್ನ ಹೃದಯದಿಂದ ಕೊಂಚ ರಕ್ತ ಒಸರಿದಂತಾಯಿತು. ಶಾಲೆಯಿಂದ ಹೊರಬಿದ್ದೊಡನೆ ನಾನು ಆರಿಸಿಕೊಂಡ ಕೆಲಸ ನನ್ನನ್ನು ಈ ಮಟ್ಟಕ್ಕೆ ಪ್ರಭಾವಿಯನ್ನಾಗಿ ಮಾಡುತ್ತದೆ ಎಂಬ ಕಲ್ಪನೆಯೂ ನನಗಿರಲಿಲ್ಲ. ‘ಕಲರ್ ಪರ್ಪಲ್’ನ ಆ ಮಹಿಳೆಯರು ನನ್ನ ಪಾಲಿಗೆ ಹೇಗೆ ಆಶಾಭಾವನೆ ತುಂಬಿದ್ದರೋ ಅದೇ ರೀತಿಯಲ್ಲಿ ನಾನೂ ಇತರರಿಗೆ ಸ್ಪೂರ್ತಿಯಾಗಿ ನಿಲ್ಲುವ ದೃಶ್ಯವನ್ನು ನಾನು ಕಲ್ಪಸಿಕೊಂಡೂ ಇರಲಿಲ್ಲ. ’ನಾನು ಸುಂದರವಾಗಿಲ್ಲ; ಕಪ್ಪಾಗಿದ್ದೇನೆ ಎಂದು ನನಗೆ ನಾನೇ ಪದೇಪದೇ ಹೇಳಿಕೊಳ್ಳುತ್ತಿದ್ದ ದಿನಗಳು ನನಗೆ ನೆನಪಾಗುತ್ತವೆ. ಟಿ.ವಿ ಆನ್ ಮಾಡಿದರೆ ಸಾಕು ಬರೀ ಬಿಳಿಮುಖಗಳನ್ನು ನೋಡುತ್ತಿದ್ದೆ. ನನ್ನ ನಿಶಾವರ್ಣದ ಬಗ್ಗೆ ಅಪಹಾಸ್ಯಪರಿಹಾಸ್ಯಕ್ಕೊಳಗಾಗುತ್ತಿದ್ದೇನೆನಿಸುತ್ತಿತ್ತು.
ಪವಾಡಗಳನ್ನೇ ಜರುಗಿಸುವ ಆ ದೇವರಿಗೆ ನನ್ನ ಒಂದೇ ಒಂದು ಪ್ರಾರ್ಥನೆ ಏನಾಗಿತ್ತೆಂದರೆ ನಾನು ಬೆಳಿಗ್ಗೆ ಹಾಸಿಗೆ ಬಿಟ್ಟು ಏಳುತ್ತಿದ್ದಂತೆ ನನ್ನ ತ್ವಚೆ ಬೆಳ್ಳಗಾಗಲಿ ಎಂದಾಗಿತ್ತು. ಏಳುವಾಗ ದೇವರೇನಾದರೂ ನನ್ನ ವಿನಂತಿ ಆಲಿಸಿ ಕೃಪೆ ತೋರಿರಬಹುದೇ ಎಂಬ ಆಸೆಯ ಕಣ್ಣುಗಳಿಂದ ಕನ್ನಡಿ ಬಳಿ ಓಡುತ್ತಿದ್ದೆ. ಕತ್ತು ಬಗ್ಗಿಸಿ ಮೈ ನೋಡಿಕೊಳ್ಳುತ್ತಿರಲಿಲ್ಲ. ಯಾಕೆಂದರೆ ನಾನು ಮೊದಲು ನೋಡಿಕೊಳ್ಳಬಯಸುತ್ತಿದ್ದುದು ಬೆಳ್ಳಗಾಗಿ ಬದಲಾದ ಮುಖಾರವಿಂದವನ್ನು. ಆದರೆ ಪ್ರತಿದಿನವೂ ನನಗೆ ಅದೇ ಆಶಾಭಂಗವಾಗುತ್ತಿತ್ತು. ರಾತ್ರಿ ಮಲಗುವಾಗ ಹೇಗಿತ್ತೋ ಬೆಳಗೆದ್ದು ನೊಡಿಕೊಂಡಾಗಲೂ ಹಾಗೇ ಇರುತ್ತಿತ್ತು ನನ್ನ ಮುಖ. ಕೊನೆಗೆ ದೇವರೊಂದಿಗೆ ಒಂದು ಚೌಕಾಸಿ ಕುದುರಿಸಲು ನೋಡಿದೆ.
ಆತನೇನಾದರೂ ನನ್ನ ಬೇಡಿಕೆ ಈಡೇರಿಸಿದರೆ ನಾನು ಸಕ್ಕರೆ ಉಂಡೆಗಳನ್ನು ಕದಿಯುವುದನ್ನು ನಿಲ್ಲಿಸಿಬಿಡುವ ಮಾತುಕೊಟ್ಟೆ. ಮಾತ್ರವಲ್ಲದೇ ದೇವರೇನಾದರೂ ನನ್ನನ್ನು ಸ್ವಲ್ಪವಾದರೂ ಬೆಳ್ಳಗೆ ಮಾಡಿದ್ದೇ ಆದಲ್ಲಿ ಅಮ್ಮ ಹೇಳುವ (ಇಲ್ಲೇ ಕುಳಿತಿದ್ದಾರೆ ಅಮ್ಮ) ಪ್ರತಿ ಮಾತನ್ನೂ ಚಾಚೂ ತಪ್ಪದೆ ಪಾಲಿಸುತ್ತೇನೆ ಮತ್ತು ಸ್ಕೂಲ್ ಸ್ವೆಟರ್ನ್ನು ಎಂದೂ ಕಳೆದುಕೊಂಡು ಮನೆಗೆ ಬರಲ್ಲ ಎಂದೂ ಮಾತುಕೊಟ್ಟೆ. ಆದರೆ ಈ ಯಾವ ಭರವಸೆಗಳೂ ದೇವರ ಮೇಲೆ ಪರಿಣಾಮ ಬೀರಲಿಲ್ಲ. ಅವನು ನನ್ನ ಮಾತುಗಳನ್ನು ಕೆಳಿಸಿಕೊಂಡೇ ಇರಲಿಲ್ಲ.
ನಾನು ಹದಿವಯಸ್ಸಿನವಳಾದಾಗ ನನ್ನ ಬಣ್ಣದ ಮೇಲೆ ನನಗಿದ್ದ ದ್ವೇಶ ಇನ್ನೂ ಹೆಚ್ಚಾಯಿತು. ನನ್ನ ಅಮ್ಮನೇನೋ ಆಗಾಗ ನನ್ನನ್ನು ‘ನೀನು ಚೆಂದ ಇದ್ದೀಯ ಕಣೆ’ ಎಂದು ಉಸುರುತ್ತಿದ್ದಳು.
ಆದರೆ ಅದು ನನಗೆನೂ ಸಮಾಧಾನ ತರುತ್ತಿಲಿಲ್ಲ. ಎಷ್ಟೆಂದರೂ ಹೆತ್ತವರಿಗೆ ಹೆಗ್ಗಣ ಮುದ್ದಲ್ಲವೇ. ಅಮ್ಮ ಹೇಳುತ್ತಿದ್ದುದೂ ಹಾಗೇ ಅಂದುಕೊಳ್ಳುತ್ತಿದ್ದೆ. ಆ ಹೊತ್ತಿನಲ್ಲಿ ಅಂತರ ರಾಷ್ರ ಮಟ್ಟದಲ್ಲಿ ಹೆಸರುವಾಸಿಯಾದ ಮಾಡೆಲ್ ತಾರೆ ಅಲೆಕ್ ವೆಕ್ ತೆರೆಯ ಮೇಲೆ ಕಾಣಿಸಿಕೊಂಡರು ನೋಡಿ. ಆಕೆಯೂ ಕತ್ತಲಿನಷ್ಟೇ ಕಡುಗಪ್ಪು ವರ್ಣದವಳು. ಆದರೂ ಪ್ರತಿಯೊಂದು ಮ್ಯಾಗಝೀನ್ ಹಾಗೂ ಪ್ರತಿಯೊಬ್ಬರ ಬಾಯಲ್ಲಿ ಆಕೆಯ ಚೆಲು”ನ ಬಗ್ಗೆ ಪುಂಖಾನುಪುಂಖವಾಗಿ ಮಾತುಗಳು ಕೇಳಿಬರುತ್ತಿದ್ದವು. ಓಪ್ರಾ ಕೂಡಾ ಆಕೆಯನ್ನು ಚೆಲುವೆ ಎಂದು ಹೇಳಿದ ಮೇಲೆ ಅದು ನಿಜಸಂಗತಿಯೇ ಸರಿ.
ನನ್ನದೇ ಬಣ್ಣದ ಮಹಿಳೆಯೊಬ್ಬಳನ್ನು ಜನರು ಸುಂದರಿ ಎಂದು ಸ್ವೀಕರಿಸುತ್ತಿರುವುದು ನನಗೆ ನನ್ನ ಕಣ್ಣುಗಳನ್ನೇ ನಂಬದಂತೆ ಮಾಡಿತ್ತು. ನನ್ನಲ್ಲಿ ನನ್ನ ಮುಖದ ಬಣ್ಣವೇ ನನಗೆ ಒಂದು ದೊಡ್ಡ ತಡೆ ಎಂದುಕೊಂಡಿದ್ದವಳು ನಾನು. ಆದರೆ ಇಲ್ಲಿ ಒಪ್ರಾ ಅದು ಹಾಗಲ್ಲ ಎನ್ನುತ್ತಿದ್ದರು. ನಾನು ನಿಜಕ್ಕೂ ಗೊಂದಲಕ್ಕೆ ಬಿದ್ದೆ. ನನ್ನ ಮನಸ್ಸು ಓಪ್ರಾ ಮಾತನ್ನು ನಿರಾಕರಿಸತೊಡಗಿತ್ತು. ಯಾಕೆಂದರೆ ನನ್ನದೇ ಅಸಮರ್ಪಕತೆಯ ಮೋಹಕ್ಕೆ ನಾನು ಹೊಂದಿಕೊಂಡಿದ್ದೆ.
ಆದರೂ ನನ್ನೊಳಗೇ ಇದ್ದ ಹೂವೊಂದು ಅರಳುತ್ತಿತ್ತು. ಅಲೆಕ್ ಅವರನ್ನು ನೋಡಿದಾಗ ನಾನು ಆಕೆಯಲ್ಲಿ ನನ್ನನ್ನೇ ಕಂಡುಕೊಂಡಿದ್ದೆ ಎನ್ನುವುದನ್ನು ಅಲ್ಲಗಳೆಯಲಾಗುವುದಿಲ್ಲ. ಆದರೂ ನನ್ನ ಸುತ್ತಲಿನ ವಾತಾವರಣದಲ್ಲಿ ಬಿಳಿಚರ್ಮಕ್ಕೆ ಆದ್ಯತೆ ನೀಡುವುದು ಇದ್ದೇ ಇತ್ತು. ಎಲ್ಲರ ದೃಷ್ಟಿಯಲ್ಲಿ ನಾನು ಸುಂದರವಲ್ಲ ಎಂಬ ಭಾವನೆ ಕೊರೆಯುತ್ತಲೇ ಇತ್ತು. ಆ ಕುರಿತು ಯೋಚಿಸಿದಾಗಲೆಲ್ಲ ಮತ್ತೆ ನಾನು ಸುಂದರಳಲ್ಲ ಎನ್ನಿಸತೊಡಗುತ್ತಿತ್ತು. ಆಗ ಅಮ್ಮ ಹೇಳುತ್ತಿದ್ದ ಮಾತು ಇಷ್ಟೆ- “ಸೌಂದರ್ಯವನ್ನು ತಿನ್ನೋಕಾಗಲ್ಲ, ಅದೇನೂ ನಿನಗೆ ಹೊಟ್ಟೆ ತುಂಬಿಸಲ್ಲ”. ಅವಳ ಈ ಮಾತುಗಳು ನನಗೆ ಬಹಳ ತಾಗಿದವು. ಸೌಂದರ್ಯ ಎನ್ನುವುದು ನಾವು ಸ್ವಾದೀನಪಡೆದುಕೊಳ್ಳಬಹುದಾದ ಅಥವಾ ನಾವು ಭೋಗಿಸುವಂತಹದ್ದಲ್ಲ. ಸೌಂದರ್ಯ ಏನಿದ್ದರೂ ನಾನು ಇರಬೇಕಾದ ಸ್ಥಿತಿ, ರೀತಿ ಎಂದು ನನಗೆ ಮನವರಿಕೆಯಾಗುವವರೆಗೂ ಅಮ್ಮ ಹೇಳಿದ್ದ ಆ ಮಾತಿನ ಅರ್ಥ ಏನೆಂದು ನನಗಾಗಿರಲಿಲ್ಲ.
’ನೀನು ನಿನ್ನ ಸೌಂದರ್ಯವನ್ನು ತಿನ್ನೋಕಾಗಲ್ಲ’ ಎಂದು ಅಮ್ಮ ಹೇಳಿದ್ದರ ಅರ್ಥ ನಮ್ಮನ್ನು ನಾವು ಉಳಿಸಿಕೊಳ್ಳುವುದು ನಾವು ಹೇಗೆ ಕಾಣುತ್ತೇವೆ ಎನ್ನುವುದನ್ನು ಅವಲಂಬಿಸಿಲ್ಲ ಎಂದು. ನಿಜದಲ್ಲಿ ನಮ್ಮನ್ನು ಉಳಿಸುವುದು ಮತ್ತು ಮೂಲಭೂತವಾಗಿ ಸುಂದರವಾದದ್ದು ಎಂದರೆ ನಮ್ಮೊಳಗಡೆ ನಮ್ಮ ಬಗೆಗೆ ಮತ್ತು ನಮ್ಮ ಸುತ್ತಲಿರುವವರ ಬಗೆಗೆ ನಾವು ಹೊಂದಿರುವ ದಯೆ; ಕರುಣೆ ಮಾತ್ರ. ಈ ಬಗೆಯ ಸೌಂದರ್ಯ ಹೃದಯವನ್ನು ಬೆಳಗಿಸಬಲ್ಲದು ಮತ್ತು ಆತ್ಮಕ್ಕೆ ಆಹ್ಲಾದವನ್ನುಂಟುಮಾಡಬಲ್ಲದು.
ನಾನು ಅಭಿನಯಿಸಿದ ಪಾತ್ರವಾದ ಪ್ಯಾಟ್ಸಿ ತನ್ನ ಒಡೆಯನೊಂದಿಗೆ ಅಷ್ಟೊಂದು ತೊಂದರೆ ಎದುರಿಸಿದ್ದೂ ಇದಕ್ಕಾಗಿಯೇ. ಅಲ್ಲದೆ ಆಕೆಯ ಈ ಕತೆಯನ್ನು ಇಲ್ಲಿಯವರೆಗೆ ಉಳಿಸಿಕೊಂಡು ಬಂದಿದ್ದೂ ಇದೇ. ಅವಳ ದೇಹದ ಸೌಂದರ್ಯ ಮಸುಕಾದ ಮೇಲೂ ಅವಳಲ್ಲಿನ ಸ್ಪೂರ್ತಿಯ ಸೌಂದರ್ಯವನ್ನು ನಾವು ನೆನಪಿಸಿಕೊಳ್ಳಬಹುದು.ನೀವು ಓದುವ ಮ್ಯಾಗಝೀನ್ಗಳಲ್ಲಿ, ಮತ್ತು ನಿಮ್ಮ ಟಿವಿಗಳ ಪರದೆಗಳ ಮೇಲೆ ನನ್ನ ಬರುವಿಕೆ ಯುವತಿಯರನ್ನೆಲ್ಲಾ ನನ್ನದೇ ಬಗೆಯ ಪಯಣದಕ್ಕೆ ಕೊಂಡೊಯ್ಯಲಿ.
ಬಾಹ್ಯ ಸೌಂದರ್ಯವನ್ನು ಗುರುತಿಸಿಕೊಳ್ಳುವುದರ ಜೊತೆಗೆ ಅಂತರಂಗದಲ್ಲಿ ಸುಂದರವಾಗಿ ಕಾಣುವ ಉದ್ದಿಮೆಯಲ್ಲಿ ಇನ್ನೂ ಆಳವಾಗಿ ತೊಡಗಿಸಿಕೊಳ್ಳುವ ಪಯಣ ನಿಮ್ಮದೂ ಆಗಲಿ ಎಂದು ಆಶಿಸುತ್ತೇನೆ. ನಾನು ಹೇಳಿದ ಈ ಅಂತರಂಗದ ಸೌಂದರ್ಯಕ್ಕೆ ಕಪ್ಪುಛಾಯೆ ಇರುವುದಿಲ್ಲ ಎಂದು ನೆನಪಿರಲಿ.
ಧನ್ಯವಾದಗಳು.
‘12 Years a Slave’ ಸಿನೆಮಾ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ3 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ1 day agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು


