Connect with us

ದಿನದ ಸುದ್ದಿ

ಡಾ. ಚಿದಾನಂದ ಮೂರ್ತಿ ಅವರಿಗೆ ಅಂತಿಮ ನಮನಗಳು

Published

on

  • ಡಾ. ಪುರುಷೋತ್ತಮ ಬಿಳಿಮಲೆ

ಸ್ವಾತಂತ್ರ್ಯೋತ್ತರ ಕಾಲದ ಕನ್ನಡ ಸಂಶೋಧನೆಗೆ ಭದ್ರವಾದ ತಳಹದಿ ಹಾಕಿಕೊಟ್ಟವರಲ್ಲಿ ಡಾ. ಚಿದಾನಂದ ಮೂರ್ತಿಯವರು (1931 – 2020) ಕೂಡಾ ಒಬ್ಬರು. ಪಾಶ್ಚಾತ್ಯ ವಿದ್ವಾಂಸರು ಮಾಡಿದ ಕೆಲಸಗಳು ಸಂಶೋಧನೆಯ ಮೂಲ ಆಕರಗಳಾಗಿ ಸಹಕರಿಸುತ್ತಲಿರುವ ಸಂದರ್ಭದಲ್ಲಿ ಅವರು ನಿಘಂಟು ಶಾಸ್ತ್ರ, ಶಾಸನ ಶಾಸ್ತ್ರ, ಹಸ್ತ ಪ್ರತಿ ಸಂಪಾದನೆ, ಗ್ರಂಥ ಸಂಪಾದನೆ, ಸಂಸ್ಕೃತಿ ಸಂಶೋಧನೆ ಮತ್ತು ಜಾನಪದ ಕೆಲಸಗಳ ಮೂಲಕ ಕನ್ನಡ ಸಂಶೋಧನೆಯ ವಸ್ತು ಮತ್ತು ವಿಧಾನಗಳನ್ನು ಪುನಾರೂಪಿಸಿದರು.

ತೀ. ನಂ. ಶೀಕಂಠಯ್ಯನವರ ಮಾರ್ಗದರ್ಶನದಲ್ಲಿ1964 ರಲ್ಲಿ ಅವರು ಪಿಎಚ್.ಡಿ ಪದವಿಗಾಗಿ ಸಿದ್ಧ ಪಡಿಸಿದ್ದ ‘ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ’ ಕೃತಿಯು ನಮಗೆಲ್ಲಾ ಪ್ರೇರಣೆ ನೀಡಿದ ಅತ್ಯುತ್ತಮ ಸಂಶೋಧನಾ ಗ್ರಂಥ. ಉಳಿದಂತೆ, ಅವರು ಬರೆದ ಭಾಷಾ ವಿಜ್ಞಾನದ ಮೂಲತತ್ವಗಳು, ವಾಗಾರ್ಥ, ಸಂಶೋಧನ ತರಂಗ ಒಂದು ಮತ್ತು ಎರಡು, ಮಧ್ಯಕಾಲೀನ ಕನ್ನಡ ಸಾಹಿತ್ಯ ಮತ್ತು ಅಸ್ಪ್ರಶ್ಯತೆ, ಹೊಸತು ಹೊಸತು, ಶೂನ್ಯ ಸಂಪಾದನೆಯನ್ನು ಕುರಿತು, ವಚನ ಸಾಹಿತ್ಯ, ಗ್ರಾಮೀಣ, ಪಗರಣ ಮತ್ತು ಇತರ ಸಂಪ್ರಯದಾಯಗಳು ಕೃತಿಗಳನ್ನು ನಾನು ಇವತ್ತಿಗೂ ಆಗಾಗ ಪರಿಶೀಲಿಸುತ್ತಿರುತ್ತೇನೆ.

1988ರಲ್ಲಿ ಅವರು ‘ಕನ್ನಡ ಶಕ್ತಿಕೇಂದ್ರವನ್ನು’ ಸ್ಥಾಪಿಸಿದ ಮೇಲೆ ಅವರ ಸಂಶೋಧನೆಯ ಪ್ರಖರತೆ ಕಳೆಗುಂದಿತು. ಆದರೆ ಕಾಲ್ನಡಿಗೆಯ ಮೂಲಕ ಬೆಂಗಳೂರಿನಿಂದ ಹಂಪಿಗೆ ಪ್ರಯಾಣ ಮಾಡಿ, ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆಗೆ ಕಾರಣರಾದರು. ಟಿಪ್ಪುವಿನ ವಿಷಯದಲ್ಲಂತೂ ಪೂರ್ಣ ಕೋಮುವಾದಿಯಾದರು. ನಾವೆಲ್ಲ ಚಿದಾನಂದಮುರ್ತೀ ಅವರ ಪುಸ್ತಕಗಳನ್ನು ಕೈಯಲ್ಲಿ ಹಿಡಿದುಕೊಂಡೇ ಕಲಬುರ್ಗಿ ಅವರ ಕಡೆಗೆ ವಾಲಿಕೊಂಡೆವು.

ನಾನು ಕನ್ನಡ ವಿವಿಯಲ್ಲಿದ್ದಾಗ ಅವರೊಮ್ಮೆ ಕನ್ನಡದ ಉಳಿವಿಗಾಗಿ ತುಂಗಾಭದ್ರ ನದಿಗೆ ಹಾರಿದ್ದರು. ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಅವರನ್ನು ಯಾರೋ ಮೇಲೆತ್ತಿ ಹಾಕಿದರು. ನಡು ರಾತ್ರಿ ನಾನು ಮತ್ತು ಕೆ ವಿ ನಾರಾಯಣ ಅವರನ್ನು ಹೊಸಪೇಟೆಗೆ ತಂದು ಆರೈಕೆ ಮಾಡಿದೆವು.

ಈಚಿಗೆ ಅವರಿಗೆ ರಾಷ್ಟ್ರಪತಿಗಳ ಪ್ರಶಸ್ತಿ ಬಂದಿತ್ತು. ‘ ಬಿಳಿಮಲೆ, ನೀವು ಅಲ್ಲಿದ್ದೀರಲ್ವಾ? ಬರ್ತೇನೆ’ ಎಂದಿದ್ದರು. ಎರಡು ದಿನ ಅವರ ಜೊತೆ ಇದ್ದೆ. ಅದಕ್ಕೂ ಹಿಂದೆ ಒಮ್ಮೆ ಬಂದಿದ್ದಾಗ, ಕೆಳದಿ ನೃಪ ವಿಜಯದಲ್ಲಿ ಉಲ್ಲೇಖಿತವಾಗಿದ್ದ ಚಾವಲ್ ಮಂಡಿಯನ್ನು ಅವರು ದೆಹಲಿಯ ಕೆಂಪು ಕೋಟೆಯ ಬಳಿ ಪತ್ತೆ ಹಚ್ಚಿದ್ದರು. ನಾನು ಸಿದ್ಧವೇಶದ ಬಗ್ಗೆ ಮತ್ತು ಕುಮಾರರಾಮನ ಬಗ್ಗೆ ಬರೆದ ಲೇಖನಗಳನ್ನು ಅವರು ಬಹಳ ಮೆಚ್ಚಿಕೊಂಡಿದ್ದರು.

ಡಿ ಎಲ್ ನರಸಿಂಹಾಚಾರ್, ಆರ್ ನರಸಿಂಹಾಚಾರ್, ಕೆ ಬಿ ಪಾಠಕ್, ಪಿ ಬಿ ದೇಸಾಯಿ, ಕೆ ಜಿ ಕುಂದಣಗಾರ, ಟಿ ಎಸ್ ವೆಂಕಣಯ್ಯ, ಮಂಜೇಶ್ವರ ಗೋವಿಂದ ಪೈ, ಮುಳಿಯ ತಿಮ್ಮಪ್ಪಯ್ಯ, ಸೇಡಿಯಾಪು ಕೃಷ್ಣ ಭಟ್, ಎಲ್ ಬಸವರಾಜು, ಶಂಭಾ ಜೋಷಿ, ಫ ಗು ಹಳಕಟ್ಟಿ, ಚನ್ನಪ್ಪ ಉತ್ತಂಗಿ ಮೊದಲಾದವರಿಂದ ಪ್ರೇರಣೆ ಪಡೆದು, ಕನ್ನಡಕ್ಕೆ ಮಹತ್ವದ ಕೊಡುಗೆ ನೀಡಿದ ಚಿದಾನಂದ ಮೂರ್ತಿ ಅವರು ನನ್ನ ಕಾಲದ ಅತ್ಯುತ್ತಮ ಸಂಶೋಧಕರಲ್ಲಿ ಒಬ್ಬರು. ಅವರಿಗೆ ನಮನಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

Published

on

3 ವರ್ಷದ ನಂತರ ಬಡ್ಡಿ ನಿಲ್ಲುತ್ತದೆ ಎಂಬುದು ಹಳೆಯ ನಿಯಮ; 58 ವರ್ಷದವರೆಗೆ ಬಡ್ಡಿ ಗ್ಯಾರಂಟಿ, ಆದರೆ ಈ ತೆರಿಗೆ ನಿಯಮ ಗೊತ್ತಿರಲಿ

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್‌ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್‌ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.

http://Visit : www.suddidina.com

3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?

ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್‌ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.

ಉದಾಹರಣೆ:

ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್‌ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.

ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!

ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್‌ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.

ಖಾತೆದಾರರು ಏನು ಮಾಡಬೇಕು?

1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್‌ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.

2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.

3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್‌ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

Continue Reading

ದಿನದ ಸುದ್ದಿ

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

Published

on

ಸೆಪ್ಟೆಂಬರ್ ಅಂತ್ಯಕ್ಕೆ ಹೊಸ ಸೇವೆ ಜಾರಿ; ಮುಂದಿನ ವಾರವೇ `ನಮ್ಮ ಬಿಎಂಟಿಸಿ 2.0' ಆ್ಯಪ್ ಲೋಕಾರ್ಪಣೆ, 200 ಹೊಸ ಮಿನಿ ಡೀಸೆಲ್ ಬಸ್ ಖರೀದಿಗೆ ಸಿದ್ಧತೆ

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್‌ಗಳಾದ ಓಲಾ, ಉಬರ್, ರ‍್ಯಾಪಿಡೋ ನಂತಹ ಆ್ಯಪ್‌ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್‌ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

http://Visit : www.suddidina.com

ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.

ನಮ್ಮ ಬಿಎಂಟಿಸಿ 2.0′ ಆ್ಯಪ್‌ನಲ್ಲಿ ಏನಿದೆ ಹೊಸತು?

ಖಾಸಗಿ ಆ್ಯಪ್‌ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್‌ನಲ್ಲಿ ಬಿಎಂಟಿಸಿ ನೆಟ್‌ವರ್ಕ್‌ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್‌ಗಳು ಸೇರಿದಂತೆ ಒಟ್ಟು 6,938 ಬಸ್‌ಗಳಿವೆ. ಪ್ರತಿದಿನ ಸರಾಸರಿ 6,200 ಬಸ್‌ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.

ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ: 

ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

200 ಹೊಸ ಮಿನಿ ಬಸ್‌ಗಳ ಖರೀದಿ:

ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್‌ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್‌ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್‌ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್‌ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್‌ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.

ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:

ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್‌ಗಳ ಪೈಕಿ 200 ಮಿನಿ ಎಸಿ ಇ-ಬಸ್‌ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್‌ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

Continue Reading

ದಿನದ ಸುದ್ದಿ

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

Published

on

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಭೆ; ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪರಿಹಾರ ಪ್ಯಾಕೇಜ್‌ಗೆ ಒತ್ತಾಯ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಿತು.

http://Visit : www.suddidina.com

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಭಾಗವಹಿಸಿದ್ದರು.

ಸಭೆಯಲ್ಲಿ ಮಾತನಾಡಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಬರದ ಛಾಯೆ ಆವರಿಸಿದ್ದು, ದಾವಣಗೆರೆ ಜಿಲ್ಲೆಯಲ್ಲೂ ಅಂತರ್ಜಲ ಮಟ್ಟ ಕುಸಿದು ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದು ತಿಳಿಸಿದರು. ಚನ್ನಗಿರಿ, ಹೊನ್ನಾಳಿ ಮತ್ತು ಜಗಳೂರು ಭಾಗದಲ್ಲಿ ಮೇವಿನ ಕೊರತೆ ಕಾಣಿಸಿಕೊಂಡಿದ್ದು, ಅಡಿಕೆ, ತೆಂಗು ಮತ್ತು ಬಾಳೆ ಸೇರಿದಂತೆ ತೋಟಗಾರಿಕೆ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಸಭೆಯ ಗಮನಕ್ಕೆ ತಂದರು.

ತೋಟಗಾರಿಕೆ ಬೆಳೆಗಳಿಗೆ ಆಗಿರುವ ಹಾನಿಯನ್ನು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ಬೆಳೆ ವಿಮೆ ಮತ್ತು ವಿಶೇಷ ಪರಿಹಾರ ಪ್ಯಾಕೇಜ್ ನೀಡಬೇಕು ಮತ್ತು ಹನಿ ನೀರಾವರಿಗೆ ಹೆಚ್ಚಿನ ಸಹಾಯಧನ ನೀಡಬೇಕು ಎಂದು ಅವರು ಸಭೆಯಲ್ಲಿ ಒತ್ತಾಯಿಸಿದರು. ಅಂತರ್ಜಲ ಮಟ್ಟ ಕುಸಿಯಲು ಕಾರಣಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅಧ್ಯಯನ ನಡೆಸಿ ಅಕ್ರಮ ಕೊಳವೆಬಾವಿ ಕೊರೆಯುವುದನ್ನು ನಿಯಂತ್ರಿಸಬೇಕು ಮತ್ತು ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಜೊತೆಗೆ ಕೆರೆಗಳಿಗೆ ನೀರು ತುಂಬಿಸುವ, ಗೋಶಾಲೆಗಳನ್ನು ತೆರೆಯುವ ಮತ್ತು ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ಹೆಚ್ಚಿಸುವ ಕುರಿತು ತುರ್ತು ಕ್ರಿಯಾ ಯೋಜನೆ ರೂಪಿಸಬೇಕು ಎಂದು ಮನವಿ ಮಾಡಿದರು.

ಬರ ಪೀಡಿತ ಪ್ರದೇಶಗಳನ್ನು ಗುರುತಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಸ್ಥಳೀಯ ಆಡಳಿತ ಹಾಗೂ ಎಲ್ಲ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Trending