ಲೈಫ್ ಸ್ಟೈಲ್
ನೀಲಿ ಪರ್ವತಗಳ ನಾಡಿನಲ್ಲಿ ಕೀಚಕರ ಹಾವಳಿ
- ಡಾ. ಸಿದ್ದಯ್ಯ ರೆಡ್ಡಿಹಳ್ಳಿ
ಜಗತ್ತಿನ ಪ್ರತಿ ಜನಾಂಗವು ತನ್ನ ಪೂರ್ವಜರ ಪ್ರತಿಭೆ ಹಾಗೂ ಹಿರಿಮೆಯನ್ನು ಹೇಳಿಕೊಳ್ಳಲು ಕಾತರಿಸುತ್ತದೆ. ಅದರಂತೆಯೇ ನಮ್ಮ ಭರತ ಖಂಡದ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ವಾಸಿಸುವ ಮಣಿಪುರಿ ಜನರು ಕ್ರಿಸ್ತಪೂರ್ವದಲ್ಲಿಯೇ ಅತ್ಯಾಧುನಿಕ ಸಾಮ್ರಾಜ್ಯವನ್ನು ಕಟ್ಟಿದ್ದರಂತೆ ಎಂದು ಹೇಳಿಕೊಳ್ಳುತ್ತಾರೆ.
ನಿಜ ಮಣಿಪುರಿಗಳು ಬೆಟ್ಟಗಳ ನಡುವೆ ಬೆಚ್ಚನೆಯ ಜೀವನವನ್ನು ಸಾಗಿಸಿದವರು. ಆದರೆ ಅಲ್ಲಿ ಕೊಳ್ಳಿ ಇಡುವ ಕೆಲಸಗಳು ಬಹಳ ಹಿಂದಿನಿಂದಲೇ ಪ್ರಾರಂಭವಾಗಿರುವುದು ತಿಳಿದುಬರುತ್ತದೆ. ವಾಸ್ತವದಲ್ಲಿ ಹಲವು ಬುಡಕಟ್ಟುಗಳ ಸಂಮಿಶ್ರಣವೇ ಮಣಿಪುರವಾಗಿದೆ. ಆದರೆ ಮಣಿಪುರಿಗಳು ಮಾತ್ರ ಈ ನೆಲದ ಮೂಲ ನಿವಾಸಿಗಳು, ಅವರಿಗೆ ಮಾತ್ರ ಸಕಲ ಸೌಕರ್ಯಗಳು ಸಿಗಬೇಕು, ಉಳಿದವರು ರಾಜ್ಯ ಬಿಡಬೇಕು ಎಂದು ಉಯಿಲ್ಲೆಬ್ಬಿಸುತ್ತಿರುವವರು ಯಾರು? ಪ್ರತಿಯೊಂದು ಬುಡಕಟ್ಟು ಜನಾಂಗಕ್ಕೆ ಇರುವಂತೆ ಹೇರಳವಾದ ಜಾನಪದ ಕಥೆ, ಪುರಾಣ ಮತ್ತು ದಂತಕಥೆಗಳ ಸಂಪತ್ತು ಇಲ್ಲಿನ ಬುಡಕಟ್ಟು ಜನಾಂಗಗಳಿಗೂ ಇದೆ.
ಮಣಿಪುರದ ರಾಜಧಾನಿ ಇಂಫಾಲ್ನಲ್ಲಿ ವಾಸಿಸುತ್ತಿದ್ದ ಜನರನ್ನು ಮಿತೇಯಿ ಅಥವಾ ಮೈತೇಯಿ ಎಂದು ಕರೆಯಲಾಗುತ್ತಿತ್ತು. ಸ್ವಾತಂತ್ರ್ಯಪೂರ್ವದಲ್ಲಿ ಮಣಿಪುರವು ಬಾಂಗ್ಲಾದ ಗುಡ್ಡುಗಾಡು ಜಿಲ್ಲೆಗಳಲ್ಲಿ ಒಂದಾಗಿತ್ತು. ಭಾರತ ಸ್ವಾತಂತ್ರ್ಯಗೊಂಡು ಎರಡು ವರ್ಷ ಎರಡು ತಿಂಗಳು ಕಳೆದ ನಂತರ ಅಂದರೆ ಅಕ್ಟೋಬರ್ 15, 1949ರಂದು ಭಾರತದೊಂದಿಗೆ ಏಕೀಕೃತವಾಯಿತು.
ಮಣಿಪುರದಲ್ಲಿ ಅಂತರ-ಜನಾಂಗೀಯ ಹಿಂಸಾಚಾರವು ಇದೇ ಮೊದಲೇನಲ್ಲ, ಇದಕ್ಕೆ ಸುದೀರ್ಘವಾದ ಇತಿಹಾಸವಿದೆ. ಮಣಿಪುರಿಗಳ ಅತಿರೇಕ ಎಲ್ಲಿಯವರೆಗೆ ಹೋಗಿತ್ತು ಎಂದರೆ 1964ರಲ್ಲಿ ಭಾರತದಿಂದ ಬಿಡುಗಡೆ ಹೊಂದಿ, ಹೊಸ ದೇಶವನ್ನು ಸೃಷ್ಟಿಸಿಕೊಳ್ಳಬೇಕು ಎಂದು ದಂಗೆಯನ್ನು ಎಬ್ಬಿಸಲಾಗಿತ್ತು. ಇದರಲ್ಲಿ ಹಲವಾರು ಗುಂಪುಗಳು ಕೂಡಿಕೊಂಡಿದ್ದವು. ಅವರಿಗೆ ಅವರದೇ ಆದ ಗುರಿಗಳು ಇದ್ದುದರಿಂದ ಈ ದಂಗೆ ವಿಫಲವಾಯಿತು.
ಚೀನಾ ದೇಶದ ಕುಮ್ಮಕ್ಕಿನಿಂದಾಗಿ ‘ರೆವಲ್ಯೂಷನರಿ ಪಾರ್ಟಿ ಆಫ್ ಕಾಂಗ್ಲೀಪಾಕ್’ ಮತ್ತು ‘ಪೀಪಲ್ಸ್ ಲಿಬರೇಶನ್ ಆರ್ಮಿಗಳು’ ಹುಟ್ಟಿಕೊಂಡವು. ಇವರು ಶಸ್ತ್ರಾಸ್ತ್ರ ತರಬೇತಿಯನ್ನು ಹೊಂದಿ, ಬ್ಯಾಂಕ್ ದರೋಡೆಗಳನ್ನು ಮಾಡುವುದು, ಪೊಲೀಸ್ ಅಧಿಕಾರಿಗಳ ಮೇಲೆ ಮತ್ತು ಸರ್ಕಾರಿ ಕಟ್ಟಡಗಳ ಮೇಲೆ ದಾಳಿ ಮಾಡುವುದು ಇಂತಹ ಕೃತ್ಯಗಳನ್ನು ಮಾಡತೊಡಗಿದರು. 1980 ರಿಂದ 2004ರವರೆಗೂ ಭಾರತ ಸರ್ಕಾರ ಮಣಿಪುರವನ್ನು ಪ್ರಕ್ಷÄಬ್ದ ಪ್ರದೇಶ ಎಂದು ಉಲ್ಲೇಖಿಸಿತ್ತು.
ಈ ಸಂದರ್ಭದಲ್ಲಿ ‘ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆ’ಯನ್ನು ಜಾರಿಗೆ ತರಲಾಯಿತು. ಈ ಕಾಯಿದೆಯ ಪ್ರಕಾರ ಖಾಸಗಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕೆಟ್ಟವರ್ತನೆಗಳನ್ನು ಮಾಡುತ್ತಿದ್ದರೆ, ಯಾವುದೇ ವಾರಂಟ್ಗಳಿಲ್ಲದೆ ಬಂಧಿಸಬಹುದಾಗಿತ್ತು. ಕಾನೂನುಗಳನ್ನು ಉಲ್ಲಂಘಿಸುವ, ಶಸ್ತ್ರಾಸ್ತ್ರಗಳನ್ನು ಹೊಂದಿರುವವರನ್ನು ಅಥವಾ ದೊಡ್ಡ ದೊಡ್ಡ ಗುಂಪುಗಳಲ್ಲಿ ಸೇರಿದ್ದವರನ್ನು ಗುಂಡಿಕ್ಕಿ ಕೊಲ್ಲುವ ಅವಕಾಶವನ್ನು ಮಿಲಿಟರಿಗೆ ಕೊಡಲಾಗಿತ್ತು. ಮಿಲಿಟರಿಯ ಪರವಾಗಿರುವ ಈ ಕಾನೂನು ಅನಿಯಂತ್ರಿತ ಹತ್ಯೆಗಳು, ಚಿತ್ರಹಿಂಸೆ, ಕ್ರೂರ ಅಮಾನವೀಯತೆ, ಅಪಹರಣದಂತಹ ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಯಿತು.
ಈ ಮಾನವ ವಿರೋದಿ ಮಿಲಿಟರಿ ಕಾನೂನಿನ ವಿರುದ್ಧ ಹಲವಾರು ಪ್ರತಿಭಟನೆಗಳು, ಹೋರಾಟಗಳು ಜರುಗಿದವು. ಇರೋಮ್ ಶರ್ಮಿಳಾ ಚಾನು ಎಂಬ ದಿಟ್ಟ ಮಹಿಳೆ ದೀರ್ಘಾವಧಿಯ ಉಪವಾಸ ಸತ್ಯಾಗ್ರಹವನ್ನು ಮಾಡಿದ್ದಳು. ಆದರೂ 2004ರಲ್ಲಿ ಸ್ಥಳೀಯ ಮಹಿಳೆಯರ ಮೇಲೆ ಹಿಂಸಾತ್ಮಕ ದಾಳಿಯನ್ನು ನಡೆಸಲಾಯಿತು. ಇದಕ್ಕೆ ಪ್ರತಿರೋಧವಾಗಿ ಪ್ರತಿಭಟನೆಗಳು ತೀವ್ರಮಟ್ಟಕ್ಕೆ ತಲುಪಿದಾಗ ಸರ್ಕಾರವು ಮಣಿಪುರದಲ್ಲಿದ್ದ ಗೊಂದಲದ ಸ್ಥಿತಿಯನ್ನು ತೆಗೆದುಹಾಕಿತು.
ಮಣಿಪುರವು ನೀಲಿ ಪರ್ವತಗಳಿಂದ ಸುತ್ತುವರೆದಿರುವ ನಾಡಾಗಿದೆ. ಈ ಪರ್ವತ ಶ್ರೇಣಿಗಳು ತಣ್ಣನೆಯ ಗಾಳಿಯನ್ನು ಮಣಿಪುರಿಗಳಿಗೆ ತಲುಪದಂತೆ ತಡೆಯುತ್ತವೆ. ಆದರೆ ಮಣಿಪುರಿಗಳಲ್ಲಿಯೇ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಲು ಅವುಗಳಿಗೆ ಸಾಧ್ಯವೇ!? ಅವುಗಳು ಚಂಡಮಾರುತದ ಬಿರುಗಾಳಿಗಳನ್ನು ತಡೆಯಬಹುದು, ಆದರೆ ಅವರಲ್ಲಿರುವ ಮೌಢ್ಯವನ್ನು ತೊಡೆದುಹಾಕಲು ಸಾಧ್ಯವೇ?!
ಮಣಿಪುರ ರಾಜ್ಯವು ಉತ್ತರಕ್ಕೆ ನಾಗಾಲ್ಯಾಂಡ್, ದಕ್ಷಿಣಕ್ಕೆ ಮಿಜೋರಾಂ, ಪಶ್ಚಿಮಕ್ಕೆ ಅಸ್ಸಾಂ ಮತ್ತು ಪೂರ್ವಕ್ಕೆ ಮಯನ್ಮಾರ್ ದೇಶದ ಗಡಿಯನ್ನು ಹೊಂದಿದೆ.
ಮಣಿಪುರದಲ್ಲಿ ಮಳೆಗೆ, ನೀರಿಗೆ ಕೊರತೆಯಿಲ್ಲ. ಇದರ ಪಶ್ಚಿಮಕ್ಕೆ ಬರಾಕ್ ನದಿಯ ಜಲಾನಯನ ಪ್ರದೇಶ, ಪೂರ್ವದಲ್ಲಿ ಯು ನದಿಯ ಜಲಾನಯನ ಪ್ರದೇಶ, ಉತ್ತರದಲ್ಲಿ ಲಾನ್ಯೆ ನದಿಯ ಜಲಾನಯನ ಪ್ರದೇಶ, ಮಧ್ಯದಲ್ಲಿ ಮಣಿಪುರ ನದಿಯ ಜಲಾನಯನ ಪ್ರದೇಶವನ್ನು ಹೊಂದಿ ಸಮೃದ್ಧವಾಗಿರುವಂತೆ, ಅಲ್ಲಿನ ಮಹಿಳೆಯರು ಧಾರಾಕಾರವಾಗಿ ಕಣ್ಣೀರನ್ನು ಸುರಿಸುತ್ತಿದ್ದಾರೆ. ಇಲ್ಲಿನ ಮಹಿಳೆಯರ ಕಣ್ಣೀರಿಗೆ ಮೊದಲನ್ನು ಗುರುತಿಸುವುದಕ್ಕೆ, ಕೊನೆಯನ್ನು ಗ್ರಹಿಸುವುದಕ್ಕೆ ಸಾಧ್ಯವಾಗುತ್ತಿಲ್ಲ.
ಮಣಿಪುರದ ಅತಿದೊಡ್ಡ ನದಿ ಬರಾಕ್. ಇದು ಇರಾಂಗ್, ಮಕು ಮತ್ತು ತುವೈ ಉಪನದಿಗಳನ್ನು ಹೊಂದಿ ಅಸ್ಸಾಂ ರಾಜ್ಯವನ್ನು ಪ್ರವೇಶಿಸುತ್ತದೆ. ಮಣಿಪುರ ನದಿಯ ಜಲಾನಯನ ಪ್ರದೇಶವು ಮಣಿಪುರ, ಇಂಫಾಲ್, ಇರಿಲ್, ನಂಬುಲ್, ಸೆಕ್ಮೆಂ, ಚಕ್ಪಿ, ತೌಬಲ್ ಮತ್ತು ಖುಗಾ ಎಂಬಂತಹ ಎಂಟು ನದಿಗಳನ್ನು ಹೊಂದಿದೆ. ಈ ಎಲ್ಲಾ ನದಿಗಳು ಸುತ್ತಮುತ್ತಲಿನ ಬೆಟ್ಟಗಳಿಂದಲೇ ಹುಟ್ಟಿಕೊಂಡಿವೆ. ಈ ನದಿಗಳ ಒಳಹರಿವಿನ ಮರ್ಮ ನಮ್ಮ ರಾಜಕಾರಣಿಗಳ ಮರ್ಮದಂತೆ ಯಾರಿಗೂ ತಿಳಿಯದಂತಹ ಕಗ್ಗಂಟಾಗಿದೆ. ನದಿಯು ತಣ್ಣಗಿದ್ದು, ಒಂದೇ ಭಾರಿ ಬೋರ್ಗರೆದು ತಣ್ಣಗಾಗುವಂತೆ ನಮ್ಮ ಪ್ರಧಾನಮಂತ್ರಿಗಳು ಮೂರು ತಿಂಗಳ ಕಾಲ ದಿವ್ಯ ಮೌನವಾಗಿದ್ದು, ಜನರ ನಿತ್ಯ ಜೀವನವು ಅಲ್ಲೋಲ-ಕಲ್ಲೋಲ ಆದಮೇಲೆ ತಣ್ಣಗೆ ಮಾತನಾಡಿದ್ದಾರೆ.
ಆದರೆ ಅಲ್ಲಿಗೆ ಹೋಗುವ ಧೈರ್ಯವನ್ನು ಮಾಡಿಲ್ಲ. ಚುನಾವಣೆ ಇದ್ದರೆ ಹತ್ತು-ಹದಿನೈದು ಬಾರಿ ರೋಡ್-ಶೋ ಮಾಡುವ ಇವರು ಕಷ್ಟದ ಕಾಲದಲ್ಲಿ ಆ ಕಡೆ ತಿರುಗಿಯು ನೋಡದೇ ಇರುವುದು ಭಾರತೀಯರು ಪಶ್ಚಾತ್ತಾಪಪಡುವಂತೆ ಮಾಡಿದೆ.
ಮಣಿಪುರವನ್ನು ಭೌತಿಕ ಲಕ್ಷಣಗಳಲ್ಲಿ ವಿಭಿನ್ನವಾಗಿರುವ ಎರಡು ವಿಭಿನ್ನ ಭೌತಿಕ ಪ್ರದೇಶಗಳಾಗಿ ನಿರೂಪಿಸಬಹುದು. ಒಂದು ಒರಟಾದ ಬೆಟ್ಟಗಳು, ಕಿರಿದಾದ ಕಣಿವೆಗಳ ಹೊರ ಪ್ರದೇಶ ಮತ್ತೊಂದು ಸಮತಟ್ಟಾದ ಬಯಲಿನ ಒಳ ಪ್ರದೇಶ. ಇಲ್ಲಿನ ಕಣಿವೆ ಪ್ರದೇಶವು ಸಮತಟ್ಟಾದ ಮೇಲ್ಮೈ ಮೇಲೆ ಏರುತ್ತಿರುವ ಬೆಟ್ಟಗಳು ಮತ್ತು ದಿಬ್ಬಗಳಿಂದ ಕೂಡಿದೆ.
ಇಲ್ಲಿನ ಲೋಕ್ಟಾಕ್ ಸರೋವರವು ಕೇಂದ್ರ ಬಯಲಿನಿಂದ ನಾಗಾಲ್ಯಾಂಡ್ನ ಗಡಿಯವರೆಗೂ ತನ್ನ ವಿಸ್ತಾರವನ್ನು ಹರಡಿಕೊಂಡಿದೆ. ಇಲ್ಲಿನ ಮಣ್ಣಿನ ಹೊದಿಕೆಗೂ ಗಂಡು-ಹೆಣ್ಣಿನ ಸಂಬಂಧಕ್ಕೂ ನಿಕಟವಾದ ಹೋಲಿಕೆ ಇರುವಂತೆ ಕಂಡುಬರುತ್ತದೆ. ಬೆಟ್ಟದ ಪ್ರದೇಶದಲ್ಲಿ ಕೆಂಪು ಫೆರುಜಿನಸ್ ಮಣ್ಣು ಮತ್ತು ಕಣಿವೆಯಲ್ಲಿ ಮೆಕ್ಕಲು ಮಣ್ಣು ಇದೆ. ಕಣಿವೆಯ ಮಣ್ಣು ಇಲ್ಲಿನ ಗಂಡಿನ ರೀತಿಯಲ್ಲಿ ಕಠಿಣವಾಗಿದ್ದರೆ, ಕಡಿದಾದ ಇಳಿಜಾರುಗಳಲ್ಲಿರುವ ಮಣ್ಣು ಹೆಣ್ಣಿನಂತೆ ಹೆಚ್ಚಿನ ಸವೆತಕ್ಕೆ ಒಳಗಾಗಿದೆ, ಒಳಗಾಗುತ್ತಿದೆ. ಇದರ ಪರಿಣಾಮವಾಗಿ ಬಂಜರು ಬಂಡೆಗಳ ಇಳಿಜಾರುಗಳು ಸೃಷ್ಟಿಯಾಗುವಂತೆ ಅಲ್ಲಿನ ಪುರುಷರ ಮನಸ್ಸುಗಳು ಬಂಡೆಯಂತೆ ಆಗುತ್ತಿರುವುದು ಖೇದಕರವಾದ ಸಂಗತಿಯಾಗಿದೆ.
ಬೆಟ್ಟದ ತಪ್ಪಲಿನಲ್ಲಿ ರತ್ನಗಂಬಳಿಯನ್ನು ಹಾಸಿಹೊದಿಸಿರುವಂತೆ ಕಾಣುವ ಫ್ಲೋರಾ ಹೂವುಗಳು ಅಲ್ಲಿನ ಬುಡಕಟ್ಟು ಮಹಿಳೆಯರ ಸೌಂದರ್ಯವನ್ನು ಬಿತ್ತರಿಸಿದರೆ, ಬೆಟ್ಟಗಳು ಪುರುಷಾಂಕಾರದಂತೆ ಕಾಣುತ್ತವೆ. ಇಲ್ಲಿ ಏನಿಲ್ಲ ಹೇಳಿ, ನೈಸರ್ಗಿಕವಾದ ಸಸ್ಯವರ್ಗವಿದೆ. ನಾಲ್ಕು ರೀತಿಯ ವಿಶಾಲವಾಗಿ ಹರಡಿರುವ ಉಷ್ಣವಲಯದ ಅರೆ-ನಿತ್ಯಹರಿದ್ವರ್ಣ, ಒಣ ಸಮಶೀತೋಷ್ಣ ಅರಣ್ಯ, ಉಪ-ಉಷ್ಣವಲಯದ ಪೈನ್ ಕಾಡುಗಳು ಮತ್ತು ಉಷ್ಣವಲಯದ ತೇವಾಂಶವುಳ್ಳ ಅರಣ್ಯಗಳಿವೆ. ತೇಗ, ಪೈನ್, ಓಕ್, ಯುನಿಂಗ್ದೌ, ಲಿಹಾವೊ, ಬಿದಿರಿನ ಮರಗಳಿವೆ. ತಮ್ಮ ಕಷ್ಟಗಳ ನಡುವೆಯೂ ರಬ್ಬರ್, ಟೀ, ಕಾಫಿ, ಕಿತ್ತಳೆ, ಏಲಕ್ಕಿ ಬೆಳೆಯುತ್ತಾರೆ. ಆದರೆ ಅವರು ಹೆಚ್ಚು ಬೆಳೆಯುವ ಮತ್ತು ಇಷ್ಟಪಡುವ ಅಕ್ಕಿಯಂತೆ ಅಲ್ಲಿನ ಪುರುಷರ ಮನಸ್ಸುಗಳು ಬೇಗನೇ ಹಾಳಾಗುತ್ತಿರುವುದು ಜಾತಿ, ಧರ್ಮಗಳೆಂಬ ಕೀಟಗಳಿಂದ ಎಂಬುದನ್ನು ಅವರು ತಿಳಿಯದಿರುವುದು ದುರದೃಷ್ಟಕರ.
ಮಣಿಪುರ ಮತ್ತು ನಾಗಾಲ್ಯಾಂಡ್ಗಳ ಗಡಿಗಳ ನಡುವೆ ಇರುವ ಝುಕೊ ಎಂಬ ಕಣಿವೆಯು ಸಮಶೀತೋಷ್ಣ ಹವಾಮಾನವನ್ನು ಹೊಂದಿರುವಂತೆ, ಅಲ್ಲಿನ ಜನರಿಗೆ ಸಮಚಿತ್ತತೆಯನ್ನು ನೀಡಿದ್ದರೆ ಚೆನ್ನಾಗಿರುತ್ತಿತ್ತು. ಭಾರತದ ಈಶಾನ್ಯ ಮೂಲೆಯು ಸಾಮಾನ್ಯವಾಗಿ ಸೌಹಾರ್ದಯುತವಾದ ಹವಾಮಾನವನ್ನು ಹೊಂದಿದೆ. ಆದರೆ ಅಲ್ಲಿನ ಜನರು ಸೌಹಾರ್ದಯುತವಾದ ಮನೋಭಾವನೆಯನ್ನು ಹೊಂದಿಲ್ಲ. ಅಲ್ಲಿನ ವಾತಾವರಣದಂತೆ ಚಳಿಗಾಲದಲ್ಲಿ ಚಳಿ ಹೆಚ್ಚಾಗಿರುವಂತೆ, ಬೇಸಿಗೆಯಲ್ಲಿ ಬಿಸಿಲು ಗರಿಷ್ಠ ಮಟ್ಟಕ್ಕೆ ಹೋಗುವಂತೆ ಅಲ್ಲಿನ ಜನರು ಆವೇಶಕ್ಕೊಳಗಾಗುತ್ತಾರೆ.
ಇಂಫಾಲದ ಮೈತೇಯಿ ಜನರು ವಾರ್ಷಿಕ ಸರಾಸರಿ 933 ಮಿಲಿಮೀಟರ್ ಮಳೆಯನ್ನು ಪಡೆಯುತ್ತಾರೆ. ಆದರೂ ಕೂಡ ತಮ್ಮದೇ ನೆಲದಲ್ಲಿರುವ ಕುಕಿ ಜನಾಂಗದ ಮಹಿಳೆಯರು ಕಣ್ಣೀರು ಸುರಿಸುವಂತೆ ನಡೆದುಕೊಳ್ಳುತ್ತಾರೆ.
ನೈರುತ್ಯ ಮಾನ್ಸೂನ್ ಮಾರುತಗಳು ಬಂಗಾಳಕೊಲ್ಲಿಯಿAದ ತೇವಾಂಶವನ್ನು ಎತ್ತಿಕೊಂಡು ಪೂರ್ವ ಹಿಮಾಲಯ ಶ್ರೇಣಿಗಳ ಕಡೆಗೆ ಹೋಗುವಾಗ ಈ ಪ್ರದೇಶದಲ್ಲಿ ಮಳೆಯಾಗುವಂತೆ ಪ್ರಕೃತಿಯೇ ನೋಡಿಕೊಂಡರೂ ಮಹಿಳೆಯರ ಕಣ್ಣೀರು ಮಾತ್ರ ಧಾರಾಕಾರವಾಗಿ ಹರಿಯುವಂತೆ ತಮ್ಮ ಸ್ವಾರ್ಥಕ್ಕಾಗಿ ರಾಜಕಾರಣಿಗಳು ನೋಡಿಕೊಳ್ಳುತ್ತಿದ್ದಾರೆ.
ಇತ್ತೀಚೆಗೆ ಮಣಿಪುರದಲ್ಲಿ ಹವಾಮಾನದಲ್ಲಿ ಬದಲಾವಣೆ ಹೆಚ್ಚಾಗುತ್ತಿದೆ. ಉದಾಹರಣೆಗೆ ಮಳೆ ಮತ್ತು ತಾಪಮಾನದಲ್ಲಿ ತೀವ್ರ ಬದಲಾವಣೆಗಳು ಹೆಚ್ಚಾಗುತ್ತಿವೆ. ಆದರೆ ಅಲ್ಲಿನ ಜನಾಂಗಗಳ ನಡುವಿನ ಬಾಂಧವ್ಯದ ಬದ್ಧತೆಗಳು ಏರುಪೇರಾಗುತ್ತಿರುವುದು ಸಾಕಷ್ಟು ಹಿಂದಿನಿAದಲೇ ನಡೆಯುತ್ತಿರುವುದು ಮನುಷ್ಯ ಸಂಬಂಧಗಳ ನಡುವೆ ಬಿರುಕು ಮೂಡಿರುವುದರ ದ್ಯೋತಕವಾಗಿದೆ. ಕಣಿವೆ ಅಥವಾ ಬಯಲು ಪ್ರದೇಶಗಳಲ್ಲಿ ಮೈತೇಯಿ ಮಾತನಾಡುವ ಅಂದರೆ ಮಣಿಪುರಿ ಭಾಷಿಕರು ನೆಲೆಸಿದ್ದಾರೆ. ಬೆಟ್ಟಗಳಲ್ಲಿ ನಾಗಾಗಳು, ಕುಕಿಗಳು ಮೊದಲಾದ ಸಣ್ಣ ಬುಡಕಟ್ಟು ಜನರು ವಾಸಿಸುತ್ತಿದ್ದಾರೆ. ಇವರು ಬೆಟ್ಟಗಳ ಮೇಲ್ಮೈ ಮಣ್ಣಿನಂತೆ ಮೈತೇಯಿ ಜನರ ಹಾವಳಿಗೆ ಕೊಚ್ಚಿ ಹೋಗುತ್ತಿದ್ದಾರೆ. ಅಲ್ಲಿ ಮೈತೇಯಿ ಭಾಷೆಯು ಮಣಿಪುರಿ ಭಾಷೆಗೆ ಸಮಾನಾರ್ಥಕವಾಗಿ ಬಳಕೆಯಾಗುತ್ತಿರುವುದರಿಂದ ಇಲ್ಲಿನ ಬಹುಪಾಲು ಜನಸಂಖ್ಯೆ ಮೈತೇಯಿಯರೇ ಎಂದು ಕರೆಸಿಕೊಂಡಿದ್ದಾರೆ.
ಇವರು ಮಣಿಪುರದ ಮುಖ್ಯ ಜನಾಂಗ ಎಂಬುದೇನೋ ಸರಿ. ಆದರೆ ನಾಗಾ ಮತ್ತು ಕುಕಿ ಬುಡಕಟ್ಟು ಜನಾಂಗಗಳನ್ನು ಹಲವಾರು ಬುಡಕಟ್ಟು ಜನಾಂಗಗಳಾಗಿ ವಿಂಗಡಿಸಲಾಗಿದೆ. ಇವರೆಲ್ಲರೂ ಒಗ್ಗಟ್ಟಾಗಿದ್ದರೆ ನಮ್ಮ ಬೇಳೆ ಬೇಯ್ಯುವುದಿಲ್ಲ ಎಂಬ ಸಾಂಸ್ಕೃತಿಕ ರಾಜಕಾರಣವು ವ್ಯವಸ್ಥಿತವಾಗಿ ಬಹಳ ಹಿಂದಿನಿAದಲೇ ಇವರನ್ನು ಹೊಡೆದು ಹೊಡೆದು ಹಾಳುತ್ತಿದೆ.
ಮಣಿಪುರದಲ್ಲಿ ಮೇ 4ರಂದು ಜರುಗಿದ ಇಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆಯು ಜುಲೈ 20ರಂದು ಹೊರ ಜಗತ್ತಿಗೆ ತಿಳಿಯಿತು. ಈ ಘಟನೆಯು ಪ್ರಪಂಚದ ಜನರನ್ನು ತಲ್ಲಣಗೊಳಿಸಿತು.
ಇಡೀ ಜಗತ್ತೇ ಈ ಕೃತ್ಯವನ್ನು ವಿರೋಧಿಸಿದರೂ ಕೂಡ, ಒಟ್ಟು ದೇಶವನ್ನೇ ತನ್ನ ಕುಟುಂಬ ಎಂದು ಕರೆದುಕೊಳ್ಳುವ ನಮ್ಮ ಪ್ರಧಾನಿಗಳು ಬೆಂಕಿ ಹೊತ್ತಿಕೊಂಡ ಮೂರು ತಿಂಗಳು ದಿವ್ಯ ಮೌನದಿಂದ ಇದ್ದರು ಎಂಬುದನ್ನು ಜಗತ್ತು ಮರೆಯುತ್ತದೆಯೇ? 140 ಕೋಟಿ ಜನರು ನನ್ನ ಕುಟುಂಬಸ್ಥರೇ ಎಂದು ಹೇಳಿಕೊಳ್ಳುವ ಪ್ರಧಾನಿಗಳು ಅದರಲ್ಲಿ ಮಹಿಳೆಯರೂ ಇದ್ದಾರೆ ಎಂಬುದನ್ನು ಮರೆತಿದ್ದಾರೆಯೇ!? ಒಟ್ಟಾರೆ ನಮ್ಮ ಪ್ರಧಾನಿಗಳ ಮೌನ, ಮೈತೇಯಿ ಮತಾಂಧರ ಆರ್ಭಟ ಕುಕಿ ಜನಾಂಗದ ಮಹಿಳೆಯರ ಬದುಕನ್ನು ಮೂರಾಬಟ್ಟೆ ಮಾಡಿರುವುದಂತೂ ಖಚಿತ.
(ಡಾ. ಸಿದ್ದಯ್ಯ ರೆಡ್ಡಿಹಳ್ಳಿ, 9449899520)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್ಗಳನ್ನು ವಶಪಡಿಸಿಕೊಳ್ಳಲಾಗುವುದು.
ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.




