Connect with us

ಲೈಫ್ ಸ್ಟೈಲ್

ನೀಲಿ ಪರ್ವತಗಳ ನಾಡಿನಲ್ಲಿ ಕೀಚಕರ ಹಾವಳಿ

Published

on

Unidentified miscreants torch two houses belonging to a particular community to retaliate the killing of nine civilians by Kukis in Manipur. (Photo: PTI)
  • ಡಾ. ಸಿದ್ದಯ್ಯ ರೆಡ್ಡಿಹಳ್ಳಿ

ಗತ್ತಿನ ಪ್ರತಿ ಜನಾಂಗವು ತನ್ನ ಪೂರ್ವಜರ ಪ್ರತಿಭೆ ಹಾಗೂ ಹಿರಿಮೆಯನ್ನು ಹೇಳಿಕೊಳ್ಳಲು ಕಾತರಿಸುತ್ತದೆ. ಅದರಂತೆಯೇ ನಮ್ಮ ಭರತ ಖಂಡದ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ವಾಸಿಸುವ ಮಣಿಪುರಿ ಜನರು ಕ್ರಿಸ್ತಪೂರ್ವದಲ್ಲಿಯೇ ಅತ್ಯಾಧುನಿಕ ಸಾಮ್ರಾಜ್ಯವನ್ನು ಕಟ್ಟಿದ್ದರಂತೆ ಎಂದು ಹೇಳಿಕೊಳ್ಳುತ್ತಾರೆ.

ನಿಜ ಮಣಿಪುರಿಗಳು ಬೆಟ್ಟಗಳ ನಡುವೆ ಬೆಚ್ಚನೆಯ ಜೀವನವನ್ನು ಸಾಗಿಸಿದವರು. ಆದರೆ ಅಲ್ಲಿ ಕೊಳ್ಳಿ ಇಡುವ ಕೆಲಸಗಳು ಬಹಳ ಹಿಂದಿನಿಂದಲೇ ಪ್ರಾರಂಭವಾಗಿರುವುದು ತಿಳಿದುಬರುತ್ತದೆ. ವಾಸ್ತವದಲ್ಲಿ ಹಲವು ಬುಡಕಟ್ಟುಗಳ ಸಂಮಿಶ್ರಣವೇ ಮಣಿಪುರವಾಗಿದೆ. ಆದರೆ ಮಣಿಪುರಿಗಳು ಮಾತ್ರ ಈ ನೆಲದ ಮೂಲ ನಿವಾಸಿಗಳು, ಅವರಿಗೆ ಮಾತ್ರ ಸಕಲ ಸೌಕರ್ಯಗಳು ಸಿಗಬೇಕು, ಉಳಿದವರು ರಾಜ್ಯ ಬಿಡಬೇಕು ಎಂದು ಉಯಿಲ್ಲೆಬ್ಬಿಸುತ್ತಿರುವವರು ಯಾರು? ಪ್ರತಿಯೊಂದು ಬುಡಕಟ್ಟು ಜನಾಂಗಕ್ಕೆ ಇರುವಂತೆ ಹೇರಳವಾದ ಜಾನಪದ ಕಥೆ, ಪುರಾಣ ಮತ್ತು ದಂತಕಥೆಗಳ ಸಂಪತ್ತು ಇಲ್ಲಿನ ಬುಡಕಟ್ಟು ಜನಾಂಗಗಳಿಗೂ ಇದೆ.

ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ವಾಸಿಸುತ್ತಿದ್ದ ಜನರನ್ನು ಮಿತೇಯಿ ಅಥವಾ ಮೈತೇಯಿ ಎಂದು ಕರೆಯಲಾಗುತ್ತಿತ್ತು. ಸ್ವಾತಂತ್ರ್ಯಪೂರ್ವದಲ್ಲಿ ಮಣಿಪುರವು ಬಾಂಗ್ಲಾದ ಗುಡ್ಡುಗಾಡು ಜಿಲ್ಲೆಗಳಲ್ಲಿ ಒಂದಾಗಿತ್ತು. ಭಾರತ ಸ್ವಾತಂತ್ರ್ಯಗೊಂಡು ಎರಡು ವರ್ಷ ಎರಡು ತಿಂಗಳು ಕಳೆದ ನಂತರ ಅಂದರೆ ಅಕ್ಟೋಬರ್ 15, 1949ರಂದು ಭಾರತದೊಂದಿಗೆ ಏಕೀಕೃತವಾಯಿತು.

ಮಣಿಪುರದಲ್ಲಿ ಅಂತರ-ಜನಾಂಗೀಯ ಹಿಂಸಾಚಾರವು ಇದೇ ಮೊದಲೇನಲ್ಲ, ಇದಕ್ಕೆ ಸುದೀರ್ಘವಾದ ಇತಿಹಾಸವಿದೆ. ಮಣಿಪುರಿಗಳ ಅತಿರೇಕ ಎಲ್ಲಿಯವರೆಗೆ ಹೋಗಿತ್ತು ಎಂದರೆ 1964ರಲ್ಲಿ ಭಾರತದಿಂದ ಬಿಡುಗಡೆ ಹೊಂದಿ, ಹೊಸ ದೇಶವನ್ನು ಸೃಷ್ಟಿಸಿಕೊಳ್ಳಬೇಕು ಎಂದು ದಂಗೆಯನ್ನು ಎಬ್ಬಿಸಲಾಗಿತ್ತು. ಇದರಲ್ಲಿ ಹಲವಾರು ಗುಂಪುಗಳು ಕೂಡಿಕೊಂಡಿದ್ದವು. ಅವರಿಗೆ ಅವರದೇ ಆದ ಗುರಿಗಳು ಇದ್ದುದರಿಂದ ಈ ದಂಗೆ ವಿಫಲವಾಯಿತು.

ಚೀನಾ ದೇಶದ ಕುಮ್ಮಕ್ಕಿನಿಂದಾಗಿ ‘ರೆವಲ್ಯೂಷನರಿ ಪಾರ್ಟಿ ಆಫ್ ಕಾಂಗ್ಲೀಪಾಕ್’ ಮತ್ತು ‘ಪೀಪಲ್ಸ್ ಲಿಬರೇಶನ್ ಆರ್ಮಿಗಳು’ ಹುಟ್ಟಿಕೊಂಡವು. ಇವರು ಶಸ್ತ್ರಾಸ್ತ್ರ ತರಬೇತಿಯನ್ನು ಹೊಂದಿ, ಬ್ಯಾಂಕ್ ದರೋಡೆಗಳನ್ನು ಮಾಡುವುದು, ಪೊಲೀಸ್ ಅಧಿಕಾರಿಗಳ ಮೇಲೆ ಮತ್ತು ಸರ್ಕಾರಿ ಕಟ್ಟಡಗಳ ಮೇಲೆ ದಾಳಿ ಮಾಡುವುದು ಇಂತಹ ಕೃತ್ಯಗಳನ್ನು ಮಾಡತೊಡಗಿದರು. 1980 ರಿಂದ 2004ರವರೆಗೂ ಭಾರತ ಸರ್ಕಾರ ಮಣಿಪುರವನ್ನು ಪ್ರಕ್ಷÄಬ್ದ ಪ್ರದೇಶ ಎಂದು ಉಲ್ಲೇಖಿಸಿತ್ತು.

ಈ ಸಂದರ್ಭದಲ್ಲಿ ‘ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆ’ಯನ್ನು ಜಾರಿಗೆ ತರಲಾಯಿತು. ಈ ಕಾಯಿದೆಯ ಪ್ರಕಾರ ಖಾಸಗಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕೆಟ್ಟವರ್ತನೆಗಳನ್ನು ಮಾಡುತ್ತಿದ್ದರೆ, ಯಾವುದೇ ವಾರಂಟ್‌ಗಳಿಲ್ಲದೆ ಬಂಧಿಸಬಹುದಾಗಿತ್ತು. ಕಾನೂನುಗಳನ್ನು ಉಲ್ಲಂಘಿಸುವ, ಶಸ್ತ್ರಾಸ್ತ್ರಗಳನ್ನು ಹೊಂದಿರುವವರನ್ನು ಅಥವಾ ದೊಡ್ಡ ದೊಡ್ಡ ಗುಂಪುಗಳಲ್ಲಿ ಸೇರಿದ್ದವರನ್ನು ಗುಂಡಿಕ್ಕಿ ಕೊಲ್ಲುವ ಅವಕಾಶವನ್ನು ಮಿಲಿಟರಿಗೆ ಕೊಡಲಾಗಿತ್ತು. ಮಿಲಿಟರಿಯ ಪರವಾಗಿರುವ ಈ ಕಾನೂನು ಅನಿಯಂತ್ರಿತ ಹತ್ಯೆಗಳು, ಚಿತ್ರಹಿಂಸೆ, ಕ್ರೂರ ಅಮಾನವೀಯತೆ, ಅಪಹರಣದಂತಹ ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಯಿತು.

ಈ ಮಾನವ ವಿರೋದಿ ಮಿಲಿಟರಿ ಕಾನೂನಿನ ವಿರುದ್ಧ ಹಲವಾರು ಪ್ರತಿಭಟನೆಗಳು, ಹೋರಾಟಗಳು ಜರುಗಿದವು. ಇರೋಮ್ ಶರ್ಮಿಳಾ ಚಾನು ಎಂಬ ದಿಟ್ಟ ಮಹಿಳೆ ದೀರ್ಘಾವಧಿಯ ಉಪವಾಸ ಸತ್ಯಾಗ್ರಹವನ್ನು ಮಾಡಿದ್ದಳು. ಆದರೂ 2004ರಲ್ಲಿ ಸ್ಥಳೀಯ ಮಹಿಳೆಯರ ಮೇಲೆ ಹಿಂಸಾತ್ಮಕ ದಾಳಿಯನ್ನು ನಡೆಸಲಾಯಿತು. ಇದಕ್ಕೆ ಪ್ರತಿರೋಧವಾಗಿ ಪ್ರತಿಭಟನೆಗಳು ತೀವ್ರಮಟ್ಟಕ್ಕೆ ತಲುಪಿದಾಗ ಸರ್ಕಾರವು ಮಣಿಪುರದಲ್ಲಿದ್ದ ಗೊಂದಲದ ಸ್ಥಿತಿಯನ್ನು ತೆಗೆದುಹಾಕಿತು.

ಮಣಿಪುರವು ನೀಲಿ ಪರ್ವತಗಳಿಂದ ಸುತ್ತುವರೆದಿರುವ ನಾಡಾಗಿದೆ. ಈ ಪರ್ವತ ಶ್ರೇಣಿಗಳು ತಣ್ಣನೆಯ ಗಾಳಿಯನ್ನು ಮಣಿಪುರಿಗಳಿಗೆ ತಲುಪದಂತೆ ತಡೆಯುತ್ತವೆ. ಆದರೆ ಮಣಿಪುರಿಗಳಲ್ಲಿಯೇ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಲು ಅವುಗಳಿಗೆ ಸಾಧ್ಯವೇ!? ಅವುಗಳು ಚಂಡಮಾರುತದ ಬಿರುಗಾಳಿಗಳನ್ನು ತಡೆಯಬಹುದು, ಆದರೆ ಅವರಲ್ಲಿರುವ ಮೌಢ್ಯವನ್ನು ತೊಡೆದುಹಾಕಲು ಸಾಧ್ಯವೇ?!
ಮಣಿಪುರ ರಾಜ್ಯವು ಉತ್ತರಕ್ಕೆ ನಾಗಾಲ್ಯಾಂಡ್, ದಕ್ಷಿಣಕ್ಕೆ ಮಿಜೋರಾಂ, ಪಶ್ಚಿಮಕ್ಕೆ ಅಸ್ಸಾಂ ಮತ್ತು ಪೂರ್ವಕ್ಕೆ ಮಯನ್ಮಾರ್ ದೇಶದ ಗಡಿಯನ್ನು ಹೊಂದಿದೆ.

ಮಣಿಪುರದಲ್ಲಿ ಮಳೆಗೆ, ನೀರಿಗೆ ಕೊರತೆಯಿಲ್ಲ. ಇದರ ಪಶ್ಚಿಮಕ್ಕೆ ಬರಾಕ್ ನದಿಯ ಜಲಾನಯನ ಪ್ರದೇಶ, ಪೂರ್ವದಲ್ಲಿ ಯು ನದಿಯ ಜಲಾನಯನ ಪ್ರದೇಶ, ಉತ್ತರದಲ್ಲಿ ಲಾನ್ಯೆ ನದಿಯ ಜಲಾನಯನ ಪ್ರದೇಶ, ಮಧ್ಯದಲ್ಲಿ ಮಣಿಪುರ ನದಿಯ ಜಲಾನಯನ ಪ್ರದೇಶವನ್ನು ಹೊಂದಿ ಸಮೃದ್ಧವಾಗಿರುವಂತೆ, ಅಲ್ಲಿನ ಮಹಿಳೆಯರು ಧಾರಾಕಾರವಾಗಿ ಕಣ್ಣೀರನ್ನು ಸುರಿಸುತ್ತಿದ್ದಾರೆ. ಇಲ್ಲಿನ ಮಹಿಳೆಯರ ಕಣ್ಣೀರಿಗೆ ಮೊದಲನ್ನು ಗುರುತಿಸುವುದಕ್ಕೆ, ಕೊನೆಯನ್ನು ಗ್ರಹಿಸುವುದಕ್ಕೆ ಸಾಧ್ಯವಾಗುತ್ತಿಲ್ಲ.

ಮಣಿಪುರದ ಅತಿದೊಡ್ಡ ನದಿ ಬರಾಕ್. ಇದು ಇರಾಂಗ್, ಮಕು ಮತ್ತು ತುವೈ ಉಪನದಿಗಳನ್ನು ಹೊಂದಿ ಅಸ್ಸಾಂ ರಾಜ್ಯವನ್ನು ಪ್ರವೇಶಿಸುತ್ತದೆ. ಮಣಿಪುರ ನದಿಯ ಜಲಾನಯನ ಪ್ರದೇಶವು ಮಣಿಪುರ, ಇಂಫಾಲ್, ಇರಿಲ್, ನಂಬುಲ್, ಸೆಕ್ಮೆಂ, ಚಕ್ಪಿ, ತೌಬಲ್ ಮತ್ತು ಖುಗಾ ಎಂಬಂತಹ ಎಂಟು ನದಿಗಳನ್ನು ಹೊಂದಿದೆ. ಈ ಎಲ್ಲಾ ನದಿಗಳು ಸುತ್ತಮುತ್ತಲಿನ ಬೆಟ್ಟಗಳಿಂದಲೇ ಹುಟ್ಟಿಕೊಂಡಿವೆ. ಈ ನದಿಗಳ ಒಳಹರಿವಿನ ಮರ್ಮ ನಮ್ಮ ರಾಜಕಾರಣಿಗಳ ಮರ್ಮದಂತೆ ಯಾರಿಗೂ ತಿಳಿಯದಂತಹ ಕಗ್ಗಂಟಾಗಿದೆ. ನದಿಯು ತಣ್ಣಗಿದ್ದು, ಒಂದೇ ಭಾರಿ ಬೋರ್ಗರೆದು ತಣ್ಣಗಾಗುವಂತೆ ನಮ್ಮ ಪ್ರಧಾನಮಂತ್ರಿಗಳು ಮೂರು ತಿಂಗಳ ಕಾಲ ದಿವ್ಯ ಮೌನವಾಗಿದ್ದು, ಜನರ ನಿತ್ಯ ಜೀವನವು ಅಲ್ಲೋಲ-ಕಲ್ಲೋಲ ಆದಮೇಲೆ ತಣ್ಣಗೆ ಮಾತನಾಡಿದ್ದಾರೆ.

ಆದರೆ ಅಲ್ಲಿಗೆ ಹೋಗುವ ಧೈರ್ಯವನ್ನು ಮಾಡಿಲ್ಲ. ಚುನಾವಣೆ ಇದ್ದರೆ ಹತ್ತು-ಹದಿನೈದು ಬಾರಿ ರೋಡ್-ಶೋ ಮಾಡುವ ಇವರು ಕಷ್ಟದ ಕಾಲದಲ್ಲಿ ಆ ಕಡೆ ತಿರುಗಿಯು ನೋಡದೇ ಇರುವುದು ಭಾರತೀಯರು ಪಶ್ಚಾತ್ತಾಪಪಡುವಂತೆ ಮಾಡಿದೆ.
ಮಣಿಪುರವನ್ನು ಭೌತಿಕ ಲಕ್ಷಣಗಳಲ್ಲಿ ವಿಭಿನ್ನವಾಗಿರುವ ಎರಡು ವಿಭಿನ್ನ ಭೌತಿಕ ಪ್ರದೇಶಗಳಾಗಿ ನಿರೂಪಿಸಬಹುದು. ಒಂದು ಒರಟಾದ ಬೆಟ್ಟಗಳು, ಕಿರಿದಾದ ಕಣಿವೆಗಳ ಹೊರ ಪ್ರದೇಶ ಮತ್ತೊಂದು ಸಮತಟ್ಟಾದ ಬಯಲಿನ ಒಳ ಪ್ರದೇಶ. ಇಲ್ಲಿನ ಕಣಿವೆ ಪ್ರದೇಶವು ಸಮತಟ್ಟಾದ ಮೇಲ್ಮೈ ಮೇಲೆ ಏರುತ್ತಿರುವ ಬೆಟ್ಟಗಳು ಮತ್ತು ದಿಬ್ಬಗಳಿಂದ ಕೂಡಿದೆ.

ಇಲ್ಲಿನ ಲೋಕ್ಟಾಕ್ ಸರೋವರವು ಕೇಂದ್ರ ಬಯಲಿನಿಂದ ನಾಗಾಲ್ಯಾಂಡ್‌ನ ಗಡಿಯವರೆಗೂ ತನ್ನ ವಿಸ್ತಾರವನ್ನು ಹರಡಿಕೊಂಡಿದೆ. ಇಲ್ಲಿನ ಮಣ್ಣಿನ ಹೊದಿಕೆಗೂ ಗಂಡು-ಹೆಣ್ಣಿನ ಸಂಬಂಧಕ್ಕೂ ನಿಕಟವಾದ ಹೋಲಿಕೆ ಇರುವಂತೆ ಕಂಡುಬರುತ್ತದೆ. ಬೆಟ್ಟದ ಪ್ರದೇಶದಲ್ಲಿ ಕೆಂಪು ಫೆರುಜಿನಸ್ ಮಣ್ಣು ಮತ್ತು ಕಣಿವೆಯಲ್ಲಿ ಮೆಕ್ಕಲು ಮಣ್ಣು ಇದೆ. ಕಣಿವೆಯ ಮಣ್ಣು ಇಲ್ಲಿನ ಗಂಡಿನ ರೀತಿಯಲ್ಲಿ ಕಠಿಣವಾಗಿದ್ದರೆ, ಕಡಿದಾದ ಇಳಿಜಾರುಗಳಲ್ಲಿರುವ ಮಣ್ಣು ಹೆಣ್ಣಿನಂತೆ ಹೆಚ್ಚಿನ ಸವೆತಕ್ಕೆ ಒಳಗಾಗಿದೆ, ಒಳಗಾಗುತ್ತಿದೆ. ಇದರ ಪರಿಣಾಮವಾಗಿ ಬಂಜರು ಬಂಡೆಗಳ ಇಳಿಜಾರುಗಳು ಸೃಷ್ಟಿಯಾಗುವಂತೆ ಅಲ್ಲಿನ ಪುರುಷರ ಮನಸ್ಸುಗಳು ಬಂಡೆಯಂತೆ ಆಗುತ್ತಿರುವುದು ಖೇದಕರವಾದ ಸಂಗತಿಯಾಗಿದೆ.

ಬೆಟ್ಟದ ತಪ್ಪಲಿನಲ್ಲಿ ರತ್ನಗಂಬಳಿಯನ್ನು ಹಾಸಿಹೊದಿಸಿರುವಂತೆ ಕಾಣುವ ಫ್ಲೋರಾ ಹೂವುಗಳು ಅಲ್ಲಿನ ಬುಡಕಟ್ಟು ಮಹಿಳೆಯರ ಸೌಂದರ್ಯವನ್ನು ಬಿತ್ತರಿಸಿದರೆ, ಬೆಟ್ಟಗಳು ಪುರುಷಾಂಕಾರದಂತೆ ಕಾಣುತ್ತವೆ. ಇಲ್ಲಿ ಏನಿಲ್ಲ ಹೇಳಿ, ನೈಸರ್ಗಿಕವಾದ ಸಸ್ಯವರ್ಗವಿದೆ. ನಾಲ್ಕು ರೀತಿಯ ವಿಶಾಲವಾಗಿ ಹರಡಿರುವ ಉಷ್ಣವಲಯದ ಅರೆ-ನಿತ್ಯಹರಿದ್ವರ್ಣ, ಒಣ ಸಮಶೀತೋಷ್ಣ ಅರಣ್ಯ, ಉಪ-ಉಷ್ಣವಲಯದ ಪೈನ್ ಕಾಡುಗಳು ಮತ್ತು ಉಷ್ಣವಲಯದ ತೇವಾಂಶವುಳ್ಳ ಅರಣ್ಯಗಳಿವೆ. ತೇಗ, ಪೈನ್, ಓಕ್, ಯುನಿಂಗ್ದೌ, ಲಿಹಾವೊ, ಬಿದಿರಿನ ಮರಗಳಿವೆ. ತಮ್ಮ ಕಷ್ಟಗಳ ನಡುವೆಯೂ ರಬ್ಬರ್, ಟೀ, ಕಾಫಿ, ಕಿತ್ತಳೆ, ಏಲಕ್ಕಿ ಬೆಳೆಯುತ್ತಾರೆ. ಆದರೆ ಅವರು ಹೆಚ್ಚು ಬೆಳೆಯುವ ಮತ್ತು ಇಷ್ಟಪಡುವ ಅಕ್ಕಿಯಂತೆ ಅಲ್ಲಿನ ಪುರುಷರ ಮನಸ್ಸುಗಳು ಬೇಗನೇ ಹಾಳಾಗುತ್ತಿರುವುದು ಜಾತಿ, ಧರ್ಮಗಳೆಂಬ ಕೀಟಗಳಿಂದ ಎಂಬುದನ್ನು ಅವರು ತಿಳಿಯದಿರುವುದು ದುರದೃಷ್ಟಕರ.

ಮಣಿಪುರ ಮತ್ತು ನಾಗಾಲ್ಯಾಂಡ್‌ಗಳ ಗಡಿಗಳ ನಡುವೆ ಇರುವ ಝುಕೊ ಎಂಬ ಕಣಿವೆಯು ಸಮಶೀತೋಷ್ಣ ಹವಾಮಾನವನ್ನು ಹೊಂದಿರುವಂತೆ, ಅಲ್ಲಿನ ಜನರಿಗೆ ಸಮಚಿತ್ತತೆಯನ್ನು ನೀಡಿದ್ದರೆ ಚೆನ್ನಾಗಿರುತ್ತಿತ್ತು. ಭಾರತದ ಈಶಾನ್ಯ ಮೂಲೆಯು ಸಾಮಾನ್ಯವಾಗಿ ಸೌಹಾರ್ದಯುತವಾದ ಹವಾಮಾನವನ್ನು ಹೊಂದಿದೆ. ಆದರೆ ಅಲ್ಲಿನ ಜನರು ಸೌಹಾರ್ದಯುತವಾದ ಮನೋಭಾವನೆಯನ್ನು ಹೊಂದಿಲ್ಲ. ಅಲ್ಲಿನ ವಾತಾವರಣದಂತೆ ಚಳಿಗಾಲದಲ್ಲಿ ಚಳಿ ಹೆಚ್ಚಾಗಿರುವಂತೆ, ಬೇಸಿಗೆಯಲ್ಲಿ ಬಿಸಿಲು ಗರಿಷ್ಠ ಮಟ್ಟಕ್ಕೆ ಹೋಗುವಂತೆ ಅಲ್ಲಿನ ಜನರು ಆವೇಶಕ್ಕೊಳಗಾಗುತ್ತಾರೆ.
ಇಂಫಾಲದ ಮೈತೇಯಿ ಜನರು ವಾರ್ಷಿಕ ಸರಾಸರಿ 933 ಮಿಲಿಮೀಟರ್ ಮಳೆಯನ್ನು ಪಡೆಯುತ್ತಾರೆ. ಆದರೂ ಕೂಡ ತಮ್ಮದೇ ನೆಲದಲ್ಲಿರುವ ಕುಕಿ ಜನಾಂಗದ ಮಹಿಳೆಯರು ಕಣ್ಣೀರು ಸುರಿಸುವಂತೆ ನಡೆದುಕೊಳ್ಳುತ್ತಾರೆ.

ನೈರುತ್ಯ ಮಾನ್ಸೂನ್ ಮಾರುತಗಳು ಬಂಗಾಳಕೊಲ್ಲಿಯಿAದ ತೇವಾಂಶವನ್ನು ಎತ್ತಿಕೊಂಡು ಪೂರ್ವ ಹಿಮಾಲಯ ಶ್ರೇಣಿಗಳ ಕಡೆಗೆ ಹೋಗುವಾಗ ಈ ಪ್ರದೇಶದಲ್ಲಿ ಮಳೆಯಾಗುವಂತೆ ಪ್ರಕೃತಿಯೇ ನೋಡಿಕೊಂಡರೂ ಮಹಿಳೆಯರ ಕಣ್ಣೀರು ಮಾತ್ರ ಧಾರಾಕಾರವಾಗಿ ಹರಿಯುವಂತೆ ತಮ್ಮ ಸ್ವಾರ್ಥಕ್ಕಾಗಿ ರಾಜಕಾರಣಿಗಳು ನೋಡಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ಮಣಿಪುರದಲ್ಲಿ ಹವಾಮಾನದಲ್ಲಿ ಬದಲಾವಣೆ ಹೆಚ್ಚಾಗುತ್ತಿದೆ. ಉದಾಹರಣೆಗೆ ಮಳೆ ಮತ್ತು ತಾಪಮಾನದಲ್ಲಿ ತೀವ್ರ ಬದಲಾವಣೆಗಳು ಹೆಚ್ಚಾಗುತ್ತಿವೆ. ಆದರೆ ಅಲ್ಲಿನ ಜನಾಂಗಗಳ ನಡುವಿನ ಬಾಂಧವ್ಯದ ಬದ್ಧತೆಗಳು ಏರುಪೇರಾಗುತ್ತಿರುವುದು ಸಾಕಷ್ಟು ಹಿಂದಿನಿAದಲೇ ನಡೆಯುತ್ತಿರುವುದು ಮನುಷ್ಯ ಸಂಬಂಧಗಳ ನಡುವೆ ಬಿರುಕು ಮೂಡಿರುವುದರ ದ್ಯೋತಕವಾಗಿದೆ. ಕಣಿವೆ ಅಥವಾ ಬಯಲು ಪ್ರದೇಶಗಳಲ್ಲಿ ಮೈತೇಯಿ ಮಾತನಾಡುವ ಅಂದರೆ ಮಣಿಪುರಿ ಭಾಷಿಕರು ನೆಲೆಸಿದ್ದಾರೆ. ಬೆಟ್ಟಗಳಲ್ಲಿ ನಾಗಾಗಳು, ಕುಕಿಗಳು ಮೊದಲಾದ ಸಣ್ಣ ಬುಡಕಟ್ಟು ಜನರು ವಾಸಿಸುತ್ತಿದ್ದಾರೆ. ಇವರು ಬೆಟ್ಟಗಳ ಮೇಲ್ಮೈ ಮಣ್ಣಿನಂತೆ ಮೈತೇಯಿ ಜನರ ಹಾವಳಿಗೆ ಕೊಚ್ಚಿ ಹೋಗುತ್ತಿದ್ದಾರೆ. ಅಲ್ಲಿ ಮೈತೇಯಿ ಭಾಷೆಯು ಮಣಿಪುರಿ ಭಾಷೆಗೆ ಸಮಾನಾರ್ಥಕವಾಗಿ ಬಳಕೆಯಾಗುತ್ತಿರುವುದರಿಂದ ಇಲ್ಲಿನ ಬಹುಪಾಲು ಜನಸಂಖ್ಯೆ ಮೈತೇಯಿಯರೇ ಎಂದು ಕರೆಸಿಕೊಂಡಿದ್ದಾರೆ.

ಇವರು ಮಣಿಪುರದ ಮುಖ್ಯ ಜನಾಂಗ ಎಂಬುದೇನೋ ಸರಿ. ಆದರೆ ನಾಗಾ ಮತ್ತು ಕುಕಿ ಬುಡಕಟ್ಟು ಜನಾಂಗಗಳನ್ನು ಹಲವಾರು ಬುಡಕಟ್ಟು ಜನಾಂಗಗಳಾಗಿ ವಿಂಗಡಿಸಲಾಗಿದೆ. ಇವರೆಲ್ಲರೂ ಒಗ್ಗಟ್ಟಾಗಿದ್ದರೆ ನಮ್ಮ ಬೇಳೆ ಬೇಯ್ಯುವುದಿಲ್ಲ ಎಂಬ ಸಾಂಸ್ಕೃತಿಕ ರಾಜಕಾರಣವು ವ್ಯವಸ್ಥಿತವಾಗಿ ಬಹಳ ಹಿಂದಿನಿAದಲೇ ಇವರನ್ನು ಹೊಡೆದು ಹೊಡೆದು ಹಾಳುತ್ತಿದೆ.
ಮಣಿಪುರದಲ್ಲಿ ಮೇ 4ರಂದು ಜರುಗಿದ ಇಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆಯು ಜುಲೈ 20ರಂದು ಹೊರ ಜಗತ್ತಿಗೆ ತಿಳಿಯಿತು. ಈ ಘಟನೆಯು ಪ್ರಪಂಚದ ಜನರನ್ನು ತಲ್ಲಣಗೊಳಿಸಿತು.

ಇಡೀ ಜಗತ್ತೇ ಈ ಕೃತ್ಯವನ್ನು ವಿರೋಧಿಸಿದರೂ ಕೂಡ, ಒಟ್ಟು ದೇಶವನ್ನೇ ತನ್ನ ಕುಟುಂಬ ಎಂದು ಕರೆದುಕೊಳ್ಳುವ ನಮ್ಮ ಪ್ರಧಾನಿಗಳು ಬೆಂಕಿ ಹೊತ್ತಿಕೊಂಡ ಮೂರು ತಿಂಗಳು ದಿವ್ಯ ಮೌನದಿಂದ ಇದ್ದರು ಎಂಬುದನ್ನು ಜಗತ್ತು ಮರೆಯುತ್ತದೆಯೇ? 140 ಕೋಟಿ ಜನರು ನನ್ನ ಕುಟುಂಬಸ್ಥರೇ ಎಂದು ಹೇಳಿಕೊಳ್ಳುವ ಪ್ರಧಾನಿಗಳು ಅದರಲ್ಲಿ ಮಹಿಳೆಯರೂ ಇದ್ದಾರೆ ಎಂಬುದನ್ನು ಮರೆತಿದ್ದಾರೆಯೇ!? ಒಟ್ಟಾರೆ ನಮ್ಮ ಪ್ರಧಾನಿಗಳ ಮೌನ, ಮೈತೇಯಿ ಮತಾಂಧರ ಆರ್ಭಟ ಕುಕಿ ಜನಾಂಗದ ಮಹಿಳೆಯರ ಬದುಕನ್ನು ಮೂರಾಬಟ್ಟೆ ಮಾಡಿರುವುದಂತೂ ಖಚಿತ.

(ಡಾ. ಸಿದ್ದಯ್ಯ ರೆಡ್ಡಿಹಳ್ಳಿ, 9449899520)

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

ದಿನದ ಸುದ್ದಿ

Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025

Published

on

Photo Gallery: ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025'

ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (ಮಾರ್ಚ್-22) ‘ಜಾನಪದ ಉತ್ಸವ – 2025″ ಅದ್ದೂರಿಯಾಗಿ ನಡೆಯಿತು.

ಜಾನಪದ ತಜ್ಞ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ, ಅವರು ಉತ್ಸವಕ್ಕೆ ಚಾಲನೆ ನೀಡಿದರು.

ಎತ್ತಿನ ಬಂಡಿಯಲ್ಲಿ ಅಧ್ಯಾಪಕರು, ಅತಿಥಿಗಳ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರು ತುಂಬಿದ ಪೂರ್ಣ ಕುಂಭಗಳನ್ನು ಹೊತ್ತು ಅತಿಥಿಗಳನ್ನು ಸ್ವಾಗತಿಸಿದರು.
 

ಅಂದು ಕಾಲೇಜಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ವರ್ಷದಲ್ಲಿ ಬರುವ ಯುಗಾದಿ, ಸಂಕ್ರಾಂತಿ, ಶಿವರಾತ್ರಿ, ಕ್ರಿಸ್ ಮಸ್, ರಂಜಾನ್, ದಸರಾ, ಭೂಮಿ ಹುಣ್ಣಿಮೆ, ರಾಶಿ ಪೂಜೆ ಸೇರಿದಂತೆ, ಬಳೆಗಾರ, ಕಣಿಹೇಳುವ, ಚೌಕಾಬಾರಾ, ಗುರುಕುಲ, ಆಯುರ್ವೇದ, ಗೋ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯನ್ನು ಪುನರ್ ನಿರ್ಮಾಣಮಾಡಿದ್ದವು.

ಉತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು, ಪಂಚೆ, ಅಂಗಿ, ಕುರ್ತಾ, ಲಂಗಾದಾವಣಿ, ಸೀರೆ ಉಟ್ಟು ,ಬುರ್ಕಾ, ತೊಟ್ಟು ಸಡಗರ ಸಂಭ್ರಮದಿಂದ ಕುಣಿದಾಡಿದರು.

ರಾಮನವಮಿಯ ಬೆಲ್ಲದ ಪಾನಕ – ಕೋಸಂಬರಿ, ಕ್ರಿಸ್ಮಸ್ ನ ಕೇಕ್, ರಂಜಾನ್ ಹಬ್ಬದ ಇಪ್ತಾರ್ ಕೂಟದ ಫಲಾಹಾರ, ಗಣಪತಿ ಹಬ್ಬದ ಕಡುಬು, ಯುಗಾದಿಯ ಹೋಳಿಗೆ, ಭೂಮಿ‌ಪೂಜೆಯ ಪಾಯಸ ಹೀಗೆ ವಿವಿಧ ಬಗೆಯ ತಿಂಡಿತಿನಿಸುಗಳು 30 ಜಿಲ್ಲೆಗಳ ವಿಶೇಷ ಖಾಧ್ಯಗಳು ಹಬ್ಬದ ಸಡಗರವನ್ನು ಇಮ್ಮಡಿಗೊಳಿಸಿದವು.

 

ವಸ್ತು ಪ್ರದರ್ಶನ

 

ಸುಮಾರು ವರ್ಷಗಳ ಹಿಂದೆ ಬಳಕೆಯಲ್ಲಿದ್ದ ಬೀಸು ಕಲ್ಲು, ಒನಕೆ, ಸೌದೆ ಒಲೆ, ಕೊಡಲಿ, ಮಚ್ಚು, ಬರ್ಜಿ, ಚನ್ನೆಮಣೆ, ಕೀಲುಗೊಂಬೆ, ಪಾರಂಪರಿಕ ಔಷಧಿ, ಕುಡುಗೋಲು, ಬಂಡಿ,ನಾಣ್ಯಗಳು,ಸೇರು, ಒಳಕಲ್ಲು, ಶಹನಾಯಿ,ಮಜ್ಜಿಗೆಯ ಕಡೆಗೋಲು, ತಾಳ, ಹಾರ್ಮೊನಿಯಂ, ಗಂಡುಕೊಡಲಿ,ಶಾವಿಗೆ ಒತ್ತು,ಹುತ್ತದ ಮಾದರಿ,ವಿಭಿನ್ನ ಬಗೆಯ ರಂಗವಲ್ಲಿ, ವಿವಿಧ ಧಾನ್ಯದ ರಾಶಿ,ಕಳಸ, ದಸರಾ ಗೊಂಬೆಗಳು, ನವರಾತ್ರಿಯ ಮಾತೃದೇವತೆ, ಕುರಾನ್ ಪ್ರತಿ, ಜಾನಮಾಜ್,ಕ್ರಿಸ್ತನ ಜನನದ ಗೋದರಿ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಮಾದರಿ ಚಿತ್ರಗಳು ವಸ್ತುಪ್ರದರ್ಶನದಲ್ಲಿದ್ದವು.

 

ದೇಸೀ ಆಟಗಳು

 

ದೇಸೀ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಬುಗುರಿ, ಕುಂಟೋಬಿಲ್ಲೆ ಹಾಗೂ ಜನಪದ ನೃತ್ಯ-ಹಾಡು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಭಾಗವಹಿಸಿದರು.

ಉತ್ಸವದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಬಿ.ಜಿ.ಅಮೃತೇಶ್ವರ ಅವರು ವಹಿಸಿಕೊಂಡಿದ್ದರು. ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಪಕ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಷ್ಮುಖಪ್ಪ ಕೆ.ಹೆಚ್, ಐಕ್ಯುಎಸಿ ಸಂಚಾಲಕ ಪ್ರೊ.ವಿಜಯ್ ಕುಮಾರ್, ಉತ್ಸವದ ಕ್ರೀಡೆಗಳ ಆಯೋಜಕ ಹಾಗೂ ದೈಹಿಕ ನಿರ್ದೇಶಕರಾದ ಕಲ್ಲೇಶಪ್ಪ ಎಸ್.ಜಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ಬೋಧಕೇತರ ಸಿಬಂದಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

Janapada Utsava Channagiri Govt collage (24)
Continue Reading

ದಿನದ ಸುದ್ದಿ

ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

Published

on

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.

ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending