ದಿನದ ಸುದ್ದಿ
ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ
- ಶಂಕರ ದೇವರು ಹಿರೇಮಠ, ಸಾಹಿತಿಗಳು
ಮಸ್ಕಿ ಭಾರತ ದೇಶ ಕೃಷಿ ಪ್ರಧಾನವಾದ ದೇಶ.ಇಲ್ಲಿ ಹಲವಾರು ಭಾಷೆ, ಹಲವಾರು ಸಂಸ್ಕೃತಿ ಹಾಗೂ ಹಲವಾರು ರಾಜ್ಯಗಳನ್ನು ಒಳಗೊಂಡ ಭಾರತ. ತನ್ನೊಳಗೆ ವಿಭಿನ್ನ ಸಂಸ್ಕೃತಿಯನ್ನು ಐತಿಹಾಸಿಕ ಹಿನ್ನೆಲೆಯನ್ನು ಒಳಗೊಂಡಿದೆ. ಇಲ್ಲಿ ಆಚರಿಸುವ ಬಹುತೇಕ ಹಬ್ಬಗಳು ಹಳ್ಳಿಯ ಸೊಗಡಿನೊಂದಿಗೆ ಸಮ್ಮಿಲಿತಗೊಂಡಿವೆ. ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಬಹುತೇಕ ಹಬ್ಬಗಳ ಹಿನ್ನೆಲೆಯನ್ನು ಒಳಗೊಂಡಿವೆ .
ಮಳೆಗಾಲದಲ್ಲಿ ಬರುವ ವಿಶೇಷ ಹಬ್ಬವೇ ಮಣ್ಣೆತ್ತಿನ ಅಮಾವಾಸ್ಯೆ. ಮಳೆಗಾಲದ ಪ್ರಾರಂಭದ ದಿನಗಳಲ್ಲಿ ಬರುವ ಈ ಹಬ್ಬ ಉತ್ತರ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡುತ್ತದೆ .ಮುಂಗಾರು ಪ್ರಾರಂಭವಾಗಿ ರೈತರು ಕೃಷಿ ಚಟುವಟಿಕೆಯನ್ನು ಪ್ರಾರಂಭಿಸಿ ಹೊಲಗಳನ್ನು ಹಸನು ಮಾಡಿ ಬಿತ್ತನೆ ಹಾಗೂ ನಾಟಿಯನ್ನು ಮಾಡಿರುತ್ತಾರೆ. ಹೊಲಗಳು ಹಸಿರಿನಿಂದ ಕಂಗೊಳಿಸುತ್ತಿರುತ್ತವೆ ಇಂತಹ ದಿನಗಳಲ್ಲಿ ರೈತರು ವಿಶ್ರಾಂತಿಯನ್ನು ಪಡೆಯುವ ಜೊತೆಗೆ ತಮ್ಮ ಒಡನಾಡಿಯಾದ ಜಾನುವಾರುಗಳನ್ನು, ಎತ್ತುಗಳನ್ನು ಪ್ರೀತಿಯಿಂದ ಪೋಷಿಸುತ್ತಾರೆ .ಕಾರ ಹುಣ್ಣಿಮೆಯ ನಂತರ ಬರುವ ಮಣ್ಣೆತ್ತಿನ ಅಮವಾಸೆ ಉತ್ತರ ಕರ್ನಾಟಕದಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಬಹು ಸಂಭ್ರಮದ ಹಬ್ಬ .
ರೈತರ ಒಡನಾಡಿ ಹಾಗೂ ರೈತರ ಉಸಿರೆಂದರೆ ಎತ್ತುಗಳು ಎತ್ತುಗಳೊಂದಿಗೆ ರೈತರು ಅವಿನಾಭಾವ ಸಂಬಂಧವನ್ನು ಹೊಂದಿರುತ್ತಾರೆ .ಎತ್ತುಗಳನ್ನು ಕೇವಲ ಪ್ರಾಣಿಗಳೆಂದು ಪರಿಗಣಿಸದೆ ತಮ್ಮ ಮನೆಯ ಸದಸ್ಯರಂದೇ ಪರಿಗಣಿಸಿ ಅವುಗಳನ್ನು ಪ್ರೀತಿಯಿಂದ ಅಕ್ಕರೆಯಿಂದ ಸಾಕುತ್ತಿರುತ್ತಾರೆ. ರಾಮ, ಲಕ್ಷ್ಮಣ ಭೀಮ, ಕರಿಯ, ಚೆನ್ನ,ಬಸವ, ಕೆಂಪ ಹಾಗೂ ತಮ್ಮ ನೆಚ್ಚಿನ ನಾಯಕ ನಟರ ಹೆಸರನ್ನು ತಮ್ಮ ಪ್ರೀತಿಯ ಎತ್ತುಗಳಿಗೆ ಇಟ್ಟು ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಾರೆ. ರೈತರ ಕಷ್ಟ ,ಸುಖಗಳಲ್ಲಿ ಹಾಗೂ ಕೃಷಿ ಚಟುವಟಿಕೆಗಳಲ್ಲಿ ಭಾಗಿಯಾಗುವ ಎತ್ತುಗಳಿಗೆ ರೈತರು ಅಪಾರ ಗೌರವವನ್ನು ನೀಡುತ್ತಾರೆ.
ಮಣ್ಣೆತ್ತಿನ ಅಮಾವಾಸ್ಯೆ ದಿನದ ಮೊದಲೇ ಹಳ್ಳ, ಹೊಳೆ, ಗದ್ದೆಗಳಿಂದ ಮಣ್ಣನ್ನು ತಂದು ಜೋಡಿ ಎತ್ತುಗಳನ್ನು ಮಾಡಿ ಎತ್ತುಗಳಿಗೆ ಮೇವು ಹಾಕುವ ಒಂದು ಗೋದಲಿಯನ್ನು ಮಾಡುತ್ತಾರೆ. ಎತ್ತುಗಳನ್ನು ಮಣ್ಣಿನಿಂದಲೇ ಮಾಡಿ ಅವುಗಳನ್ನು ದೇವರ ಮನೆಯ ಜಗಲಿ ಮೇಲಿಟ್ಟು ಪೂಜೆ ಮಾಡುತ್ತಾರೆ. ಇನ್ನೂ ಕೆಲವರು ಹೊಲಗಳಿಗೆ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಮಾಡುತ್ತಾರೆ .
ರೈತ ಹಾಗೂ ಎತ್ತುಗಳಿಗೆ ಅವಿನಾಭಾವ ಸಂಬಂಧ ಶತಶತಮಾನಗಳಿಂದ ಇದೆ. ಭಾರತದ ಪ್ರತಿಯೊಂದು ಕೃಷಿ ಕುಟುಂಬವು ಕೃಷಿಯೊಂದಿಗೆ ಹಾಗೂ ಮಣ್ಣಿನೊಂದಿಗೆ ಅವಿನಾಭಾವ ಸಂಬಂಧದ ನಂಟಿದೆ .ಮಳೆಗಾಲದಲ್ಲಿ ಬಿತ್ತನೆಯಾಗಿ ಬೆಳೆ ಬೆಳೆದು ಹಸಿರಿನಿಂದ ಭೂಮಿ ಕಂಗೊಳಿಸುತ್ತಿರುವ ಈ ದಿನಗಳಲ್ಲಿ ಕೃಷಿಯಲ್ಲಿ ಭಾಗಿಯಾಗುವ ಎತ್ತುಗಳಿಗೆ ಗೌರವಿಸುವ ಮೂಲಕ ಈ ದಿನಗಳಲ್ಲಿ ಶ್ರಮ ಶ್ರಮ ಸಂಸ್ಕೃತಿಯನ್ನು ಗೌರವಿಸುವ ಕಾರ್ಯ ಶತಮಾನಗಳಿಂದ ನಡೆದುಕೊಂಡು ಬಂದಿದೆ .
ಹಳ್ಳಿಗಳಲ್ಲಿ ಕುಂಬಾರರು ತಯಾರಿಸಿದ ಸುಂದರವಾದ ಎತ್ತುಗಳನ್ನು ಕೊಂಡು ತಂದು ಅವುಗಳಿಗೆ ಪೂಜೆ ಸಲ್ಲಿಸಿ ಸಂಭ್ರಮಿಸಿ ಸಂತೋಷಪಡುವರು. ರೈತರು ಹಿಂದೆ ಎತ್ತುಗಳನ್ನು ಕೊಟ್ಟು ಅದರ ಬದಲಾಗಿ ದವಸ ಧಾನ್ಯಗಳನ್ನು ಪಡೆಯುತ್ತಿದ್ದರು. ಇಂದು ನಗರೀಕರಣದ ಪರಿಣಾಮ ಎತ್ತುಗಳು ಮಾರಾಟದ ಸರಕಾಗಿ ಪರಿಣಮಿಸಿವೆ. ಆದರೂ ಇನ್ನೂ ಹಳ್ಳಿಗಳಲ್ಲಿ ಎತ್ತುಗಳನ್ನು ಪೂಜ್ಯನೀಯ ಸ್ಥಾನದಲ್ಲಿ ಇಟ್ಟು ಗೌರವಿಸುತ್ತಾರೆ. ಮಣ್ಣೆತ್ತಿನ ಅಮಾವಾಸ್ಯೆ ವಿಶೇಷವಾಗಿ ಮಕ್ಕಳಿಗೆ ಸಂಭ್ರಮದ ಹಬ್ಬ. ಹಬ್ಬದ ಮರುದಿನ ಮಕ್ಕಳು ಮನೆ ಮನೆಗೆ ತೆರಳಿ ಕುಂಟೆತ್ತು ಬಂದಿದೆ ಅಂತ ಹೇಳಿ ಅಕ್ಕಿ, ಜೋಳ, ಕಾಳು, ಬೆಲ್ಲ ತಂದು ಅವುಗಳಿಂದ ಸಿಹಿ ಅಡಿಗೆ ಮಾಡಿಕೊಂಡು ಎಲ್ಲ ಮಕ್ಕಳು ಊಟ ಮಾಡಿ ಎತ್ತುಗಳಿಗೆ ಮತ್ತೊಮ್ಮೆ ಪೂಜೆ ಸಲ್ಲಿಸಿ ಅವುಗಳನ್ನು ವಿಸರ್ಜಿಸುವ ಪದ್ಧತಿ ರೂಢಿ ಇದೆ. ಮಕ್ಕಳೆಲ್ಲ ಸಂಭ್ರಮದಿಂದ ಈ ಕಾರ್ಯದಲ್ಲಿ ಭಾಗವಹಿಸಿ ಮಣ್ಣೆತ್ತಿನ ಅಮಾವಾಸ್ಯೆ ಯನ್ನು ಜೀವಂತವಾಗಿಸುವ ಕಾರ್ಯವನ್ನು ಈಗಲೂ ಮಾಡುತ್ತಿದ್ದಾರೆ .
ಈಗೀಗ ಕೃಷಿ ಚಟುವಟಿಕೆಗಳಿಗೆ ಹೆಚ್ಚಾಗಿ ಯಂತ್ರಗಳನ್ನು ಹಾಗೂ ಟ್ರ್ಯಾಕ್ಟರ್ ಗಳನ್ನು ಬಳಸುತ್ತಿರುವ ಕಾರಣದಿಂದ ಎತ್ತುಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ರೈತರ ಒಡನಾಡಿಯಾದ ಎತ್ತುಗಳು ಇಂದು ಪ್ರತಿಷ್ಠೆಯ ಪ್ರತೀಕವಾಗಿ ಇನ್ನೂ ಕುಟುಂಬದ ಕೆಲವರು ಲಕ್ಷ ಲಕ್ಷ ಹಣ ಕೊಟ್ಟು ಖರೀದಿಸಿ ಮನೆಗೆ ತಂದು ಎತ್ತುಗಳನ್ನು ಸಾಕುತ್ತಿದ್ದಾರೆ. ಎತ್ತುಗಳು ನಮ್ಮ ಅನ್ನದಾತರ ಗೌರವ ಪ್ರತೀಕ .ನಾವೆಲ್ಲರೂ ಕುಳಿತು ಊಟ ಮಾಡುವ ಪ್ರತಿಯೊಂದು ಅನ್ನದ ಅಗಳಿನ ಹಿಂದೆ ಕೋಟಿಗಟ್ಟಲೆ ರೈತರ ಶ್ರಮ ಇದೆ .ಆ ಶ್ರಮದ ಹಿಂದೆ ಎತ್ತುಗಳ ಒಡೆಯನಾದ ರೈತನ ಮೇಲಿನ ಪ್ರೀತಿ ಇದೆ .(ಬರಹ-ಶಂಕರ ದೇವರು ಹಿರೇಮಠ, ಸಾಹಿತಿಗಳು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ
ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.
ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ
ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.
ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ
ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.
ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ
ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.
ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ
ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.
ಭವಿಷ್ಯದ ಆಶಯ
ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
ಸುದ್ದಿದಿನ,ದಾವಣಗೆರೆ:ಎ.ವಿ.ಕೆ. ಕಾಲೇಜು ಹಾಗೂ ಹಳೆ ಬಿಸ್ಲೇರಿ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. ವಿಶೇಷ ಶಿಬಿರದ ನಾಲ್ಕನೇ ದಿನದ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಅಧಿಕಾರಿಗಳಾದ ಉಪ್ಪಾರ ಮತ್ತು ರಫಿಕ್ ಅವರು ಬೆಂಕಿ ನಂದಿಸುವ ವಿಧಾನಗಳು, ಗ್ಯಾಸ್ ಲೀಕ್ ಆದಾಗ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು ಹಾಗೂ ಬೆಂಕಿ ಅವಘಡಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು. ಅಗ್ನಿ ಆಕಸ್ಮಿಕ ನಿರ್ವಹಣೆಯ ಪ್ರಾತ್ಯಕ್ಷಿಕೆ ಶಿಬಿರಾರ್ಥಿಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಿಜಿ ಆಸ್ಪತ್ರೆ, ದಾವಣಗೆರೆ ಉಪಮುಖ್ಯ ವೈದ್ಯಾಧಿಕಾರಿಗಳಾದ ಡಾ. ಪ್ರಭು ಎಂ. ಬಿಸ್ಲೇರಿ ಅವರು ಮಾನಸಿಕ ಆರೋಗ್ಯದ ಮಹತ್ವ, ದುಶ್ಚಟಗಳಿಂದ ದೂರವಿರುವ ಅಗತ್ಯ ಮತ್ತು ಯುವ ಪೀಳಿಗೆ ಉತ್ತಮ ಜೀವನ ರೂಪಿಸಿಕೊಳ್ಳುವ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಒತ್ತಡವನ್ನು ಸಮರ್ಥವಾಗಿ ನಿಭಾಯಿಸಬೇಕು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ತಿಪ್ಪೇಸ್ವಾಮಿ ಅವರು ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ ವಿವಿಧ ಶೈಕ್ಷಣಿಕ ಹಾಗೂ ಉದ್ಯೋಗಾವಕಾಶಗಳ ಕುರಿತು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಸತೀಶ್ ಕಲಹಾಳ್ ಅವರು “ತಂಬಾಕು ಮುಕ್ತ ಯುವ ಅಭಿಯಾನ 2.0” ಕುರಿತು ಮಾತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಹಾನಿ, ತಂಬಾಕು ಬಿಡುವ ಲಾಭಗಳು ಹಾಗೂ ತಂಬಾಕು ಉತ್ಪಾದನೆಯ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ಜೀವಿತ ಎಂ.ಪಿ., ಶ್ರೀಮತಿ ಉಷಾ ಎಂ.ಆರ್., ಡಾ. ಲೋಹಿತ್, ಡಾ. ಸತೀಶ್, ಡಾ. ವೀಣಾ, ಡಾ. ರಾಜಕುಮಾರ, ಸೂರ್ಯಪ್ರಸಾದ್, ಕವಿತಾ ಎಂ.ಎಂ., ವಿಶ್ವನಾಥ ಡಿ.ಆರ್. ಪರಶುರಾಮ್ ಕಟಾವು ಕರ್, ಗ್ರಾಮಸ್ಥರಾದ ಶ್ರೀಮತಿ ರಶ್ಮಿ ಸತೀಶ್, ಶ್ರೀಮತಿ ರತ್ನಮ್ಮ ಮಹೇಶ್, ಶ್ರೀಮತಿ ಮಂಜುಳಾ ಮಲ್ಲೇಶ್, ಶ್ರೀ ಶಾರದ, ಶಿವರಾಧಿಕಾರಿಗಳಾದ ಡಾ. ವಿಶ್ವನಾಥ ಪಿ., ಡಾ. ಕವಿತ ಆರ್.ಜಿ. ಹಾಗೂ ಅನೇಕ ಶಿಬಿರಾರ್ಥಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
ಕಾರ್ಯಕ್ರಮವು ಆರೋಗ್ಯ ಮತ್ತು ಸುರಕ್ಷತೆ ಕುರಿತ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ1 day ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ಅಂಕಣ6 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ4 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ5 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ24 hours agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಕ್ರೀಡೆ4 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ24 hours agoಬದುಕಿನಲ್ಲಿ ಪ್ರಾಮಾಣಿಕತೆ ಮತ್ತು ಪರಿಶ್ರಮವಿದ್ದರೆ ಯಶಸ್ಸು ನಿಶ್ಚಿತ


