ಲೈಫ್ ಸ್ಟೈಲ್
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ | ಏನಿದು MDMA ಡ್ರಗ್ ಮಾತ್ರೆ..? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್ : ಮಿಸ್ ಮಾಡ್ದೆ ಓದಿ
- ವೈಶಾಲಿ ದುರ್ಗಪ್ಪ
ಡ್ರಗ್ಸ್ ಮಾಫಿಯಾ ಜಗತ್ತಿಗೆ ಹೊಸದೇನಲ್ಲ. ಇದುವರೆಗೂ ಈ ಡ್ರಗ್ಸ್ ಮಾಫಿಯಾವನ್ನು ಸಂಪೂರ್ಣವಾಗಿ ತಡೆದುಹಾಕಲು ಪೊಲೀಸ್ ವ್ಯವಸ್ಥೆಗೆ ಯಾಕೆ ಸಾಧ್ಯವಾಗಿಲ್ಲ ಎಂಬ ಯಕ್ಷ ಪ್ರಶ್ನೆ ಕಾಡುತ್ತದೆ. ಡ್ರಗ್ಸ್ ಬಗ್ಗೆ ಆಗೊಮ್ಮೆ- ಈಗೊಮ್ಮೆ ಪತ್ರಿಕೆಯ ಯಾವುದೋ ಮೂಲೆಯಲ್ಲಿ ಸಣ್ಣ ಸುದ್ದಿಯಾಗಿ, ಸಿನೆಮಾಗಳ ಒಂದಷ್ಟು ದೃಶ್ಯಗಳಲ್ಲಿ ನೋಡಿದ ನೆನಪು ಬರುತ್ತದೆ.
ಪ್ರಸ್ತುತ ನ್ಯೂಸ್ ಚಾನೆಲ್ ಗಳ ಟಿ ಆರ್ ಪಿ ಕೇಂದ್ರಿತ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದ ಸುದ್ದಿ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ವಿಚಾರಣೆ ಒಳಗಾದ ಕೆಲವು ನಟನಟಿಯರಿಂದ MDMA ಎಂಬ ಡ್ರಗ್ ಮಾತ್ರೆಯನ್ನು ಸೇವಿಸಿದ್ದರ ಬಗ್ಗೆ ಮಾಹಿತಿ ದೊರೆತಿದೆ.
ಹಾಗಾದರೆ ಏನಿದು MDMA .? ಇದನ್ನು ಸೇವಿಸಿದರೆ ದೇಹ ಮತ್ತು ಮನಸಿನ ಮೇಲಾಗುವ ದುಷ್ಪರಿಣಾಮಗಳೇನು..?ಎಂಬುದರ ಬಗ್ಗೆ ಸರ್ಕಾರದ ‘National Institute on Drug Abuse‘ ವೆಬ್ಸೈಟ್ ನಲ್ಲಿ ಪ್ರಕಟವಾಗಿರುವ ಬರಹವನ್ನು ಇಂಗ್ಲಿಷ್ ನಿಂದ ಕನ್ನಡಕ್ಕೆ ‘ವೈಶಾಲಿ ದುರ್ಗಪ್ಪ’ ಅವರು ತಂದಿದ್ದಾರೆ. ಈ ಬರಹ MDMA ಬಗ್ಗೆ ಹಲವು ಮಾಹಿತಿಯನ್ನು ನೀಡುತ್ತದೆ. ಈ ಬರಹ ಓದಿ ಪ್ರತಿಕ್ರಿಯಿಸಿ.
ಎಂಡಿಎಂಎ ಎಂದರೇನು..?
3,4-ಮಿಥೈಲಿನ್ ಡೈ ಆಕ್ಸಿ – ಹೆಪ್ಟಾಮೈನ್ (3,4-methylenedioxy-methamphetamine(MDMA)
ಇದು ವ್ಯಕ್ತಿ ಒಬ್ಬನ ಬಾಹ್ಯ ಪ್ರಪಂಚದ ಬಗ್ಗೆ ತನಗಿರುವ ಗ್ರಹಿಕೆ ಹಾಗೂ ಮನಸ್ಥಿತಿಯನ್ನು ಬದಲಾಯಿಸುವಂತಹ ಒಂದು ಸಂಶ್ಲೇಷಿತ (ಸಿಂಥೆಟಿಕ್) ಡ್ರಗ್ ಆಗಿದೆ. ಇದು ರಾಸಾಯನಿಕವಾಗಿ ಉತ್ತೇಜಕ ಹಾಗೂ ಭ್ರಾಮಕಗಳಿಗೆ ಹೋಲುತ್ತದೆ. ಈ ಡ್ರಗ್ ಅನ್ನು ಸೇವಿಸಿದ ವ್ಯಕ್ತಿಯಲ್ಲಿ ದೇಹಕ್ಕೆ ಇದ್ದಕ್ಕಿದ್ದಂತೆ ಶಕ್ತಿ ದೊರೆಯುವುದು, ಅತೃಪ್ತ ಮಾನಸಿಕ ಸಂತೋಷ ಹೊಂದುವುದು. ಭಾವನಾತ್ಮಕವಾಗಿ ಬೆಚ್ಚಗಿನ ಅನುಭವ ಹೊಂದಿ ತನಗರಿವಿಲ್ಲದ ಯಾವುದೋ ಲೋಕದಲ್ಲಿ ವಿಹರಿಸುವಂತಹ ಭಾವನೆಯಲ್ಲಿ ತೇಲುವರು.
ರಾಸಾಯನಿಕ Molecular ಪದವನ್ನು ಸಂಕ್ಷಿಪ್ತಗೊಳಿಸಿ. Molly ಎಂಬ ಹೆಸರಿನಿಂದ MDMA ಡ್ರಗ್ ಅನ್ನು ಯುವಜನರಲ್ಲಿ ಪ್ರಚಲಿತ ಗೊಳಿಸಿದ್ದಾರೆ. ಮೊದಲೆಲ್ಲಾ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಗಳಲ್ಲಿ ದೊರೆಯುತ್ತಿದ್ದ ಡ್ರಗ್ ಇಂದು ಕಾಲೇಜು ಅಂಗಳದವರೆಗೂ ಕಾಲಿಟ್ಚಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ.
ವ್ಯಸನಿಗಳು ಡ್ರಗ್ ಅನ್ನು ಹೆಚ್ಚಾಗಿ ಮಾತ್ರೆ ಅಥವಾ ಕ್ಯಾಪ್ಸುಲ್ ರೂಪದಲ್ಲಿ ಸೇವನೆ ಮಾಡುವರು. ಕೆಲವರು ಇದನ್ನು ದ್ರವ ರೂಪದಲ್ಲಿ ಸೇವಿಸಿದರೆ, ಹೆಚ್ಚಿನವರು ಡ್ರಗ್ ಪುಡಿಯನ್ನು ಉಸಿರುಗಟ್ಟಿ ಒಳಸೇದುವ ಮೂಲಕ ಸೇವಿಸುವರು. ಸ್ಫಟಿಕ ರೂಪದ ಪುಡಿಯನ್ನು ಹೆಚ್ಚಾಗಿ ಕ್ಯಾಪ್ಸುಲ್ ರೂಪದಲ್ಲಿ ಮಾರಾಟ ಮಾಡುವುದು ಪ್ರಚಲಿತದಲ್ಲಿದೆ. ಇಷ್ಟೇ ಅಲ್ಲದೆ Molly ಡ್ರಗ್ ಅನ್ನು ಆಲ್ಕೋಹಾಲ್ ಅಥವಾ ಗಾಂಜಾದೊಟ್ಟಿಗೆ ಸೇರಿಸಿ ತೆಗೆದುಕೊಳ್ಳುವುದು ಸಹ ಕೆಲವರಲ್ಲಿ ರೂಢಿಯಲ್ಲಿದೆ.
MDMA ಡ್ರಗ್ ನ ವ್ಯವಸಿಗಳಲ್ಲಿ ಮೆದುಳಿನ ಮೇಲೆ ಪರಿಣಾಮ ಬೀರಿ, ಬಾಹ್ಯ ನಡವಳಿಕೆಗಳಲ್ಲಿ ಬದಲಾವಣೆಯನ್ನು ತರುವಲ್ಲಿ ಮೂರು ರಾಸಾಯನಿಕಗಳು ಮುಖ್ಯ ಪಾತ್ರ ವಹಿಸುತ್ತದೆ. ಅವುಗಳೆಂದರೆ,
1.ಡೋಪಮೈನ್ (Dopamine)
ಈ ರಾಸಾಯನಿಕವು ದೇಹಕ್ಕೆ ಹೆಚ್ಚು ಶಕ್ತಿಯನ್ನು ಒದಗಿಸಿ, ವ್ಯಕ್ತಿಯ ನಡವಳಿಕೆಯನ್ನು ಇದ್ದಕ್ಕಿದ್ದಂತೆ ಬದಲಾಯಿಸುವುದು.
2.ಸೆರಟೋನಿನ್ (Serotonin)
ವ್ಯಕ್ತಿಯಲ್ಲಿ ಮನಸ್ಥಿತಿಯ ಬದಲಾಯಿಸುವುದು, ಹಸನಾಗಿಸುವುದು ಅಥವಾ ನಿದ್ರೆ ಬರಿಸುವುದು ಈ ರಾಸಾಯನಿಕದ ಕೆಲಸವಾಗಿದೆ. ಹಾಗೂ ಅವರಲ್ಲಿ ಲೈಂಗಿಕ ಆಸಕ್ತಿ ಹೆಚ್ಚಿಸುವಂತಹ ಹಾರ್ಮೋನುಗಳನ್ನು ಸ್ರವಿಸುವಲ್ಲಿ ಪಾತ್ರ ವಹಿಸುತ್ತದೆ. ಸೆರಟೋನಿನ್ ಹೆಚ್ಚು ಉತ್ಪಾದನೆ ಆಗುವುದರಿಂದ ಭಾವಾತಿರೇಕ ಉಂಟಾಗುವುದು, ಜೊತೆಯಲ್ಲಿರುವವರ ಮೇಲೆ ಎಂದೂ ಕಾಣದ ಪ್ರೀತಿ ಉಂಟಾಗುವುದು, ಎಲ್ಲೋ ಹೇಳಿದಂತಹ ಅನುಭವವೂ ಆಗುವುದುಂಟು.
3.ನೊರ್ಪೈನ್ಫ್ರಿನ್ (Norepinephrine)
ರಕ್ತದೊತ್ತಡ ಹಾಗೂ ಹೃದಯ ಬಡಿತ ಹೆಚ್ಚಾಗುವುದು, ವಿಶೇಷವಾಗಿ ಹೃದಯ ಸಂಬಂಧಿ ಕಾಯಿಲೆ ಇರುವಂತಹವರಿಗೆ ಈ ರಾಸಾಯನಿಕದ ಪ್ರಮಾಣ ದೇಹದಲ್ಲಿ ಹೆಚ್ಚಾದಲ್ಲಿ ಮಾರಣಾಂತಿಕವೂ ಆಗಬಹುದು.
ಇದರೊಟ್ಟಿಗೆ, ವಾಕರಿಕೆ ಬರುವುದು, ಮಾಂಸಖಂಡಗಳಲ್ಲಿ ಸೆಳೆತ ಉಂಟಾಗುವುದು, ತಮಗರಿವಿಲ್ಲದೆ ಹಲ್ಲು ಕಡಿಯುವುದು, ಕಣ್ಣು ಮಂಜಾದಂತಾಗುವುದು, ಬೆವರುವುದು, ಚಳಿ ಯಾಗುವಂತಹ ಆರೋಗ್ಯ ಸಂಬಂಧಿ ಪರಿಣಾಮಗಳನ್ನು ಅನುಭವಿಸುವರು.
MDMA ಡ್ರಗ್ ಗನ್ನು ಒಮ್ಮೆ ಸೇವಿಸಿದರೆ, ಅದರ ಪರಿಣಾಮ ಕನಿಷ್ಠ ಮೂರರಿಂದ ಆರು ಗಂಟೆಗಳವರೆಗೆ ಇರಬಹುದು. ಮೊದಲ ಡೋಸ್ ನ ಪರಿಣಾಮ ಕಡಿಮೆಯಾಗುತ್ತಾ ಹೋದಂತೆ ಕೆಲವೊಬ್ಬರು ಮತ್ತೊಂದು ಡೋಸ್ ನ ಮೊರೆ ಹೋಗುವರು.ಡೋಸ್ ಕಡಿಮೆ ಆದರೂ ಸಹ, ಕೆಲವು ವಾರಗಳವರೆಗೆ, ವ್ಯಕ್ತಿಯಲ್ಲಿ ದೈಹಿಕವಾಗಿ ಕಿರಿಕಿರಿ ಅನುಭವಿಸುವುದು, ಆಕ್ರಮಣಕಾರಿ ನಡವಳಿಕೆ, ಖಿನ್ನತೆಗೆ ಒಳಗಾದ ಭಾವ, ನಿದ್ರಾಹೀನತೆ, ಆತಂಕ, ನೆನಪಿನ ಶಕ್ತಿಯ ಕೊರತೆ, ಹಸಿವಾಗದೆ ಇರುವಂತಹ ಅನುಭವ, ಲೈಂಗಿಕತೆಯಲ್ಲಿ ಉತ್ಸಾಹದ ಕೊರತೆಯಂತಹ ಪರಿಣಾಮಗಳನ್ನು ಎದುರಿಸಬೇಕಾಗಬಹುದು.
‘MDMA’ ಡ್ರಗ್ ನ ವೈದ್ಯಕೀಯ ಪ್ರಾಮುಖ್ಯತೆ
1970 ರಲ್ಲಿ ಮೊದಲ ಬಾರಿಗೆ MDMA ಡ್ರಗ್ ಅನ್ನು ಮನೋವೈದ್ಯಕೀಯ ಚಿಕಿತ್ಸೆಯಲ್ಲಿ ಬಳಸಲಾಯಿತು.(ಟಾಪ್ ತೆರಫಿ ಅಂತಹ ಮಾನಸಿಕ ಚಿಕಿತ್ಸೆಗಳಲ್ಲಿ) ಆದರೆ ವ್ಯಸನಿಗಳು/ಸಂಶೋಧಕರನ್ನು ಉಪಯೋಗಿಸಿಕೊಂಡು ವೈದ್ಯಕೀಯ ಪ್ರಯೋಗವನ್ನು ನಡೆಸಿದಂತಹ ಆಧಾರಗಳಿಲ್ಲ ಅಥವಾ ಯು.ಎಸ್ ನ ಫುಡ್ ಅಂಡ್ ಅಡ್ಮಿನಿಸ್ಟ್ರೇಷನ್ ನಿಂದ ಮಾನ್ಯತೆಯು ಸಿಕ್ಕಿಲ್ಲ.
ಆದರೆ, 1985 ರಲ್ಲಿ ಯು. ಎಸ್ ನ ಡ್ರಗ್ ಎನ್ಫೋರಸ್ಮೆಂಟ್ ಅಡ್ಮಿನಿಸ್ಟ್ರೇಷನ್ MDMA ಅನ್ನು ವೈದ್ಯಕೀಯ ಚಿಕಿತ್ಸೆಯಲ್ಲಿ ಕಾನೂನುಬಾಹಿರ ಎಂದು ಆದೇಶಿಸಿತು. ಆದರೆ, ಕೆಲವು ಸಂಶೋಧಕರ ಪ್ರಕಾರ, ನಿಯಂತ್ರಿತ ಪರಿಸ್ಥಿತಿಗಳಲ್ಲಿ, ಮನೋ ವೈದ್ಯಕೀಯ ಚಿಕಿತ್ಸೆಗಳಲ್ಲಿ ಬಳಸಬಹುದು ಎಂಬ ವಾದವನ್ನು ಮುಂದಿಟ್ಟು ಡಿಸೇಸ್ ಇತ್ತೀಚಿನ ಬೆಳವಣಿಗೆಯಲ್ಲಿ ಪೋಸ್ಟ್ ಟ್ರೆಮಾಟಿಕ್ ಸ್ಟ್ರೆಸ್( PTSD) ಚಿಕಿತ್ಸೆಯಲ್ಲಿ MDMA ಯನ್ನು ಬಳಸಿ ಪ್ರಗತಿಯನ್ನು ಸಾಧಿಸಿ ಯಶಸ್ವಿಯಾಗಿ ಹೊಸ ಆಯಾಮವನ್ನು ತೆರೆದಿದ್ದಾರೆ.
‘MDMA’ ಸೇವನೆಯಿಂದ ಆರೋಗ್ಯದ ಮೇಲಾಗುವಪರಿಣಾಮಗಳು
ಅತಿಯಾದ ಸೇವನೆಯಿಂದಾಗಿ ದೇಹದ ಉಷ್ಣತೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗುವುದು, ದೇಹದ ಉಷ್ಣತೆಯು ಹೆಚ್ಚಾಗುವುದು, ಇದು ಯಕೃತ್ತು ಹಾಗೂ ಮೂತ್ರಪಿಂಡಗಳ ಕಾರ್ಯದಲ್ಲಿ ಅಡೆತಡೆಯನ್ನು ಉಂಟುಮಾಡಬಹುದು. ಕೆಲವೊಮ್ಮೆ ಅಸ್ವಾಭಾವಿಕ ಲೈಂಗಿಕ ಸಂಪರ್ಕ ಹೊಂದುವುದರಿಂದ, ಲೈಂಗಿಕ ಪ್ರಸರಣ ರೋಗ( STD) ಗಳಾದ ಗೊನೋರಿಯ,AID/HIV ಹಾಗೂ ಹೆಪಟೈಟಿಸ್ ನಂತಹ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಿದೆ.
MDMA ಡ್ರಗ್ ಒಂದು ವ್ಯಸನವೇ..?
ಸಂಶೋಧನೆಗಳ ಪ್ರಕಾರ ಇದು ವ್ಯಸನವೇ ಎಂಬುದು ಖಚಿತವಾಗಿಲ್ಲ. ಅಲ್ಲದೇ, ಇದು ಕೋಕೋ ನಷ್ಟು ಗೀಳಲ್ಲವೆಂಬುದು ಸಂಶೋಧಕರ ವಾದವಾಗಿದೆ. ಆದರೆ, ಕೆಲವು ವ್ಯಸನಿಗಳು ಆಯಾಸ ಖಿನ್ನತೆಗೆ ಒಳಗಾಗುವುದು, ಹಸಿವಿಲ್ಲದಿರುವುದು, ಏಕಾಗ್ರತೆಯಲ್ಲಿ ಕೊರತೆಯನ್ನು ಅನುಭವಿಸುವಂತಹ ಲಕ್ಷಣಗಳನ್ನು ತೋರುವುದು ಉಂಟು.
ವ್ಯಸನಿಗಳಿಗೆ ಬಳಸಬಹುದಾದ ಚಿಕಿತ್ಸೆ
ಇಂತಹದ್ದೇ ಚಿಕಿತ್ಸೆಯನ್ನು ಬಳಸಿ MDMAಡ್ರಗ್ ನಾ ಚಟದಿಂದ ವ್ಯಕ್ತಿಯೊಬ್ಬನನ್ನು ವ್ಯಸನಮುಕ್ತ ಗಳಿಸಬಹುದು ಎಂದು ಹೇಳುವಂತಹ ಯಾವುದೇ ಖಂಡಿತವಾದ ಚಿಕಿತ್ಸೆಯು ವೈದ್ಯಕೀಯ ಕ್ಷೇತ್ರದಲ್ಲಿಲ್ಲ. ಆದರೆ, ‘Behavioral
Therapy’ /ನಡವಳಿಗೆ ಚಿಕಿತ್ಸೆಯು ಪರಿಣಾಮಕಾರಿ ಆಗಬಲ್ಲದು ಎಂಬ ನಂಬಿಕೆಗಳಿವೆ. ಅದು ಎಷ್ಟರ ಮಟ್ಟಿಗೆ ಪರಿಣಾಮಕಾರಿ ಎಂಬ ನಿಟ್ಟಿನಲ್ಲಿ ಸಂಶೋಧನೆಗಳು ಇನ್ನಷ್ಟೇ ನಡೆಯಬೇಕಿದೆ.
ಮೂಲ ಬರಹದ ಲಿಂಕ್ ಇಲ್ಲಿದೆ, ಕ್ಲಿಕ್ ಮಾಡಿ ಓದಿ
https://www.drugabuse.gov/publications/drugfacts/mdma-ecstasymolly
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ3 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು



