Connect with us

ಅಂತರಂಗ

ಅರಿಮೆಯ ಅರಿವಿರಲಿ-53 : ಮನೋರೋಗಕ್ಕೆ ಮದ್ದಿದೆ

Published

on

  • ಯೋಗೇಶ್ ಮಾಸ್ಟರ್

ರಿಯಾಗಿ ಜತನ ಮಾಡಿದ ಮಗುತನವು ಸರಿಯಾದ ತನ್ನತನವನ್ನು ಕಂಡುಕೊಳ್ಳುವ ವ್ಯಕ್ತಿಯಾಗಿ ಪ್ರಕಟವಾಗುತ್ತದೆ. ತನ್ನತನದ ಸ್ಫೋಟವಾಗುವ ಅವಧಿ ಎಂದರೆ ಅದು ಹದಿಹರೆಯದಲ್ಲಿ.

ಸಾಮಾನ್ಯವಾಗಿ 12 ರಿಂದ 18ರವರೆಗಿನ ಅವಧಿಯಲ್ಲಿ ತಮ್ಮತನದ ಹುಡುಕಾಟ ಮತ್ತು ಕಂಡುಕೊಂಡಂತಹ ತನ್ನತನದೊಂದಿಗೆ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ತಮ್ಮನ್ನು ಇತರರೊಂದಿಗೆ ತುಲನೆ ಮಾಡಿಕೊಳ್ಳುತ್ತಾರೆ. ಸಾಮಾನ್ಯವಾಗಿ ಆಗ ರೂಪುಗೊಳ್ಳುವ ತನ್ನತನವನ್ನು ಜೀವನಪರ್ಯಂತ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದೇ ಸಮಯದಲ್ಲಿ ತಮ್ಮ ಸಮವಯಸ್ಕರನ್ನು ಪ್ರಭಾವಿಸುವಂತಹ ಆಶಯಗಳನ್ನು ಹೊಂದುತ್ತಾ ತಂತ್ರಗಳನ್ನೂ ಕೂಡಾ ಕಂಡುಕೊಳ್ಳಲು ಯತ್ನಿಸುತ್ತಾರೆ.

ಅವರಿಗೆ ಸಂಪೂರ್ಣ ಸ್ವಾತಂತ್ರ್ಯದ ಹಂಬಲವಿರುತ್ತದೆ. ಮತ್ತೂ ಕೆಲವರಿಗೆ ಸ್ವಾವಲಂಬಿಯಾಗಿರಲೂ ಕೂಡಾ ಯತ್ನಿಸುತ್ತಾರೆ. ಸ್ವಾತಂತ್ರ್ಯ ಮತ್ತು ಸ್ವಾವಲಂಬನವೆರಡೂ ತನ್ನತನವು ಗಟ್ಟಿಯಾಗಿರುವುದರ ಪರಿಣಾಮಕಾರಿಯಾದ ಲಕ್ಷಣಗಳು. ಅದರ ಜೊತೆಜೊತೆಗೇ ಸ್ಪರ್ಧಾತ್ಮಕ ಧೋರಣೆಯೂ ಕೂಡಾ ಬಲವಾಗುತ್ತಾ ಬರುತ್ತದೆ. ಹದಿಹರೆಯದಲ್ಲಿ ಎರಡು ಮುಖ್ಯವಾದಂತಹ ಪ್ರಭಾವಗಳು ತನ್ನತನದ ಪರಿಕಲ್ಪನೆ ಮತ್ತು ಆತ್ಮಗೌರವದ ಮೇಲಾಗುತ್ತದೆ.

ಒಂದು ತಮ್ಮ ಆಸಕ್ತಿ ಇರುವಂತಹ ಕ್ಷೇತ್ರಗಳಲ್ಲಿ ಯಶಸ್ಸನ್ನು ಹೊಂದುವುದು. ಎರಡನೆಯದು ಪ್ರಭಾವಶಾಲಿ ವ್ಯಕ್ತಿಗಳಿಂದ ಅಥವಾ ಪ್ರಮುಖರಾದ ವ್ಯಕ್ತಿಗಳಿಂದ ಮಾನ್ಯತೆ ಮತ್ತು ಪ್ರೋತ್ಸಾಹಗಳನ್ನು ಪಡೆಯುವುದು. ಈವೆರಡೂ ಅವರತನದ ವಿಕಾಸಕ್ಕೆ ಮತ್ತು ದೃಢತೆಗೆ ಬಹಳ ಪರಿಣಾಮಕಾರಿಯಾಗಿರುತ್ತದೆ.
ಯಾವಾಗ ಹದಿಹರೆಯದವರಿಗೆ ತಮ್ಮತನದ ಬಗ್ಗೆ ಆರೋಗ್ಯಕರವಾದಂತಹ ಧೋರಣೆಗಳನ್ನು ಹೊಂದುತ್ತಾರೋ ಅವರು ಸಹಜವಾಗಿ ಅದನ್ನು ಸಮಾಜದಲ್ಲಿ ಯಶಸ್ವಿಯಾಗಿಯೇ ಅಭಿವ್ಯಕ್ತಿಸುತ್ತಾರೆ.

ಸಾಮಾನ್ಯವಾಗಿ ಈ ತನ್ನತನದ ಪರಿಕಲ್ಪನೆಯು ಎಲ್ಲವೂ ಸಕಾರಾತ್ಮಕವಾಗಿ ಅಥವಾ ಎಲ್ಲವೂ ನಕಾರಾತ್ಮಕವಾಗಿ ಇರುವುದಿಲ್ಲ. ಕೆಲವೊಂದು ಸಕಾರಾತ್ಮಕವಾಗಿರುತ್ತವೆ, ಮತ್ತೆ ಕೆಲವು ನಕಾರಾತ್ಮಕವಾಗಿರುತ್ತವೆ.

ಉದಾಹರಣೆಗೆ ವಿದ್ಯಾರ್ಥಿಯೊಬ್ಬ ಕ್ರೀಡಾ ಚಟುವಟಿಕೆಗಳಲ್ಲಿ ಚೆನ್ನಾಗಿ ಗುರುತಿಸಿಕೊಂಡಿದ್ದು, ಅದರಲ್ಲಿ ತನ್ನ ಸಾಮರ್ಥ್ಯವನ್ನು ಕಂಡುಕೊಂಡಿರುತ್ತಾನೆ. ಆದರೆ, ಅವನಿಗೇ ಅರಿವಿದೆ ತಾನು ಪಠ್ಯದ ವಿಷಯದಲ್ಲಿ ಹಿಂದುಳಿದಿದ್ದೇನೆ ಎಂದು. ಅದು ಅವನಲ್ಲಿ ಕೊಂಚ ಹಿನ್ನೆಡೆಯ ಮನೋಭಾವವೂ ಹೊಗೆಯಾಡುತ್ತಿರುತ್ತದೆ.
ಅದೇ ರೀತಿ ಬಹಳ ಸೃಜನಶೀಲವಾಗಿರುವ ಕೆಲವು ಸಾಹಿತಿಗಳು ಮತ್ತು ಕಲಾವಿದರು ತಮ್ಮ ವೈಯಕ್ತಿಕ ಜೀವನದಲ್ಲಿ ಶಿಸ್ತುಬದ್ಧವಾಗಿ ಬದುಕಲು ಸಾಧ್ಯವಾಗದೇ ಹಿಂದುಳಿದಿರುತ್ತಾರೆ.

ಸಕಾರಾತ್ಮಕವಾಗಿರುವ ತನ್ನತನದಲ್ಲಿ ಕಾಣಬಹುದಾದಂತಹ ಕೆಲವು ಅಂಶಗಳೆಂದರೆ:-

  1. ವ್ಯಕ್ತಿಯು ತನ್ನನ್ನು ವಿವೇಕಶಾಲಿಯೆಂದು ತಿಳಿದಿರುತ್ತಾನೆ. ತನ್ನ ಬುದ್ಧಿ ಅಥವಾ ವಿವೇಕವನ್ನು ಸಕಾಲದಲ್ಲಿ ಉಪಯೋಗಿಸಲು ಸಾಧ್ಯವಿರುತ್ತದೆ ಎಂಬ ಆತ್ಮವಿಶ್ವಾಸ ಅವನಲ್ಲಿ ಇರುತ್ತದೆ.
  2. ಸಮುದಾಯದಲ್ಲಿ ಅಥವಾ ಸಮಾಜದಲ್ಲಿ ತನ್ನ ಸ್ಥಾನವನ್ನು ಗೌರವಯುತವಾಗಿಯೇ ಗುರುತಿಸಿಕೊಂಡಿರುತ್ತಾನೆ. ಅವನಲ್ಲಿ ಸಾಮಾಜಿಕ ಕೀಳರಿಮೆ ಇರುವುದಿಲ್ಲ.
  3. ಮದುವೆಯಾಗಿರುವ ಹೆಂಗಸರು ತಮ್ಮನ್ನು ತಾವು ಲಾಯಕ್ಕಾದ ಹೆಂಡತಿ ಮತ್ತು ತನ್ನ ಓರಗೆಯವರಿಗೆ ಒಳ್ಳೆಯ ಗೆಳತಿ ಎಂದು ಭಾವವನ್ನು ಹೊಂದಿರುತ್ತಾರೆ.
  4. ತಾನು ಪೋಷಿಸುವ ಮತ್ತು ಇತರರ ಹಿತಾಸಕ್ತಿಯನ್ನು ಕಾಯುವವ ಎಂಬ ಧೋರಣೆ ಹೊಂದಿರುತ್ತಾರೆ.
  5. ತಾನು ಶ್ರಮವಹಿಸಿ ದುಡಿಯಬಲ್ಲೆ ಮತ್ತು ಸಾಮರ್ಥ್ಯವಿರುವಂತಹ ಉದ್ಯೋಗಿ ಎಂಬ ಭಾವ.

ನಕಾರದ ನಖರ

ಸರಿ, ಇಷ್ಟೆಲ್ಲಾ ಸಕರಾತ್ಮಕವಾದ ಯೋಚನೆಗಳನ್ನು ಹೊಂದಿರುವಂತೆ ಕೆಲವರಲ್ಲಿ ನಕಾರಾತ್ಮಕವಾದವೂ ಸೇರಿಕೊಂಡಿರುತ್ತವೆ. ಅವುಗಳಲ್ಲಿ:-

  1. ತನಗೆ ಸಾಮರ್ಥ್ಯವಿದೆ ಆದರೆ ಮೂರ್ಖ ಮತ್ತು ನಿಧಾನ. ಚುರುಕಿಲ್ಲ.
  2. ತನ್ನಲ್ಲಿ ಪ್ರತಿಭೆ ಇದ್ದರೂ ಸ್ವಾವಲಂಬಿಯಾಗಿರದ ಕಾರಣ ನಾನು ಅನ್ನಕ್ಕೆ ದಂಡ ಭೂಮಿಗೆ ಭಾರ.
  3. ನಾನು ನೋಡಲು ಚೆನ್ನಾಗಿದ್ದೇನೆ. ಆರೋಗ್ಯವಾಗಿದ್ದೇನೆ. ಆದರೆ ಒಳ್ಳೆಯ ಹೆಂಡತಿಯಲ್ಲ. ಸರಿಯಾಗಿ ಮನೆಯಲ್ಲಿ ಸ್ಥಾನ ಸಂಪಾದಿಸಲು ಸಾಧ್ಯವಾಗಿಲ್ಲ.
  4. ನನಗೆ ಒಳ್ಳೆಯ ಮನಸ್ಸಿದೆ. ಆದರೆ ಒರಟ ದುಡುಕುತನದಿಂದ ಕೂಡಿದ್ದೇನೆ. ಹಾಗಾಗಿ ನನ್ನ ನಾನಿರುವುದಕ್ಕಿಂತ ಬೇರೆ ರೀತಿಯಲ್ಲಿ ಜನ ಅರ್ಥ ಮಾಡಿಕೊಳ್ಳುತ್ತಾರೆ.
  5. ನನ್ನಲ್ಲಿ ಅಪಾರವಾದ ಸೃಜನಶೀಲತೆ ಇದೆ, ಪ್ರತಿಭೆ ಮತ್ತು ಕೌಶಲ್ಯವಿದೆ. ಆದರೆ ನಾನು ಜನ ಸೇರದವ. ಮುಂದಾಗುವ ಗುಣವಿಲ್ಲ. ಆದ್ದರಿಂದ ಹಿಂದುಳಿಯುತ್ತೇನೆ.
  6. ನಾನೊಬ್ಬ ಸೋಮಾರಿ. ಈ ಜಡತ್ವ ಮತ್ತು ಕೆಲಸಗಳನ್ನು ಮುಂದೂಡುವ ಗುಣವಿಲ್ಲದೇ ಹೋಗಿದ್ದರೆ ನಾನು ಒಬ್ಬ ಯಶಸ್ವಿ ವ್ಯಕ್ತಿಯಾಗಿರುತ್ತಿದ್ದೆ.

ಇವುಗಳು ಹೀಗಿರುವುದು ಏನೂ ಅಪರಾಧವೂ ಅಲ್ಲ, ಸರಿಪಡಿಸಲಾಗದಂತಹ ನ್ಯೂನ್ಯತೆಯೂ ಅಲ್ಲ. ಕಂಡುಕೊಂಡದ್ದನ್ನು ಎಚ್ಚರಿಕೆಯಿಂದ ಸರಿಪಡಿಸಿಕೊಳ್ಳುವ ದಿಕ್ಕಿನಲ್ಲಿ ಕೆಲಸ ಮಾಡಬೇಕಷ್ಟೇ. ಇವುಗಳನ್ನು ಸರಿಪಡಿಸಿಕೊಳ್ಳದೇ ಹೋದ ಪಕ್ಷದಲ್ಲಿ ಮನೋಭಾವಗಳೇ ಮನೋರೋಗಗಳಾಗಿ ಪರಿಣಮಿಸುತ್ತವೆ.

ಮನೋರೋಗದ ಹಾಳು ಗಾದೆ

ಮನೋರೋಗ ಅಂದರೆ ಯಾವುದು? ಮನೋರೋಗಿಗಳು ಎಂದರೆ ಯಾರು?
ಯಾರನ್ನೂ ಸೇರದೇ, ತಮ್ಮ ಪಾಡಿಗೆ ತಾವು ಏನೇನೋ ಮಾತಾಡಿಕೊಂಡು, ಯಾವುದೋ ಮೂಲೆಯಲ್ಲಿ, ಕತ್ತಲೆಯಲ್ಲಿ, ಯಾರಿಗೂ, ಯಾವುದಕ್ಕೂ ಸ್ಪಂದಿಸದೇ, ಅಥವಾ ಎಲ್ಲಕ್ಕೂ ಭಯಂಕರವಾಗಿ ಪ್ರತಿಕ್ರಿಯಿಸುತ್ತಾ ಇರುವವರೋ ಅಥವಾ ಬಟ್ಟೆ ಹರಿದುಕೊಂಡು, ಯಾರನ್ನೂ ಗುರುತಿಸದೇ, ಯಾರೆಂದರೆ ಅವರಿಗೆ ಕಲ್ಲುಗಳಲ್ಲಿ ಹೊಡೆಯುತ್ತಾ ಇರುವವರು ಎಂದೇನಾದರೂ ಅಂದುಕೊಂಡಿದ್ದರೆ ಅವರ ಬಗ್ಗೆ ನನಗೆ ತೀವ್ರ ಅನುಕಂಪವಿದೆ.

ತಲೆಗೆ, ಕಣ್ಣಿಗೆ, ಹೊಟ್ಟೆಗೆ, ಬೆನ್ನಿಗೆ, ಚರ್ಮಕ್ಕೆ, ಕೈ ಕಾಲಿಗೆ ನೋವೋ, ಬಾವೋ, ತುರಿಕೆಯೋ, ಊತವೋ, ಉರಿಯೋ ಎಂತದ್ದೋ ಬರುತ್ತದೆ. ಯಾವುದೇ ಕಾರಣದಿಂದ ಸಮಸ್ಯೆ ಬಂದು ಅದು ಆ ಹೊತ್ತಿಗೆ, ಒಂದು ಮಟ್ಟಕ್ಕೆ ಕಾಣಿಸಿಕೊಳ್ಳುವುದು. ಅದಕ್ಕೆ ಬೇಕಾದ ಔಷಧವನ್ನು ತೆಗೆದುಕೊಳ್ಳುತ್ತೇವೆ.ನಿವಾರಿಸಿಕೊಳ್ಳುತ್ತೇವೆ. ನೋವು, ಬಾವು, ಊತ, ಉರಿ ಹೋಯಿತೆಂದರೆ ಸಮಸ್ಯೆ ಹೋಯಿತೆಂದರ್ಥ.

ಒಂದು ವೇಳೆ ಯಾವುದೇ ಒಂದು ಸಮಸ್ಯೆ ಬಂದು, ಸಣ್ಣ ಪುಟ್ಟ ಮದ್ದುಗಳಿಂದ, ಉಪಚಾರಗಳಿಂದ ಹೋಗದೇ ಒಂದೇ ಸಮನೆ ಕಾಡುತ್ತಿದ್ದರೆ ಅದಕ್ಕೆ ರೋಗ ಎನ್ನಬಹುದೇನೋ. ಅದಕ್ಕೂ ದೀರ್ಘಕಾಲದ ಉಪಚಾರ, ನಿಯಮಿತ ಮದ್ದಿನ ಸೇವನೆ ಇರುತ್ತದೆ. ಒಟ್ಟಾರೆ ದೇಹಕ್ಕೆ ಏನಾದರೂ ಆದರೆ ಕಾಣುವಂತಹ ಲಕ್ಷಣಗಳಿಂದ ಸಮಸ್ಯೆಯನ್ನೋ, ರೋಗವನ್ನೋ ಪತ್ತೆ ಹಚ್ಚಿ ಅದಕ್ಕೆ ಅಗತ್ಯವಿರುವ ಚಿಕಿತ್ಸೆ ಮಾಡುತ್ತೇವೆ ಅಥವಾ ಮಾಡಿಕೊಳ್ಳುತ್ತೇವೆ.

ಅದೇ ರೀತಿ ಮನಸ್ಸಿಗೂ ಆಗಾಗ ಸಮಸ್ಯೆ ಬರುತ್ತದೆ. ಆ ಸಮಸ್ಯೆಯನ್ನು, ಲಕ್ಷಣಗಳನ್ನು ನಿರ್ಲಕ್ಷಿಸಿದರೆ ಅದು ರೋಗವಾಗಿ ಮುಂದುವರಿಯುತ್ತದೆ. ವಿಪರ್ಯಾಸವೆಂದರೆ ತಮಗೆ ತಲೆನೋವು ಇದೆ ಎಂದು ಒಪ್ಪಿಕೊಂಡಂತೆ, ಸಕ್ಕರೆ ಖಾಯಿಲೆ ಅಥವಾ ರಕ್ತದೊತ್ತಡ ಇದೆ ಎಂದು ಒಪ್ಪಿಕೊಂಡಂತೆ ಮನೋರೋಗವಿದೆ ಎಂದು ಒಪ್ಪಿಕೊಳ್ಳಲು ಸಾಮಾನ್ಯವಾಗಿ ತಯಾರಿರುವುದಿಲ್ಲ. ಅದೇ ಸಮಸ್ಯೆ.

ಮೂಡುವ ಭಾವನೆಗಳಿಂದಾಗಿ, ಮಾಡುವ ಆಲೋಚನೆಗಳಿಂದಾಗಿ, ತೋರುವ ವರ್ತನೆಗಳಿಂದಾಗಿ, ನೀಡುವ ಪ್ರತಿಕ್ರಿಯೆಗಳಿಂದಾಗಿ, ಸ್ಪಂದಿಸುವ ರೀತಿಗಳಿಂದಾಗಿ ರೋಗಗ್ರಸ್ತ ಮನಸ್ಥಿತಿಯು ಕಾಣಿಸಿಕೊಳ್ಳುತ್ತಲೇ ಇರುತ್ತದೆ. ಆದರೆ ಅದನ್ನು ಆ ಹೊತ್ತಿನ ಸಂಗತಿ ಅಥವಾ ಸನ್ನಿವೇಶಕ್ಕೆ ತಮ್ಮ ಪ್ರತಿಕ್ರಿಯೆ ಅಥವಾ ತಮ್ಮ ಮೇಲಾಗಿರುವ ಪ್ರಭಾವ ಎಂದುಕೊಂಡು ಸುಮ್ಮನಾಗಿಬಿಡುತ್ತಾರೆ.

ಅದು ಮತ್ತೂ ದೊಡ್ಡ ಸಮಸ್ಯೆ. ಹೀಗಾಗಿ ತಾವೇ ತಮ್ಮ ಮನೋರೋಗವನ್ನು ಪತ್ತೆ ಹಚ್ಚಿಕೊಳ್ಳುವುದಿಲ್ಲ. ಒಂದು ವೇಳೆ ಬೇರೆಯವರು ಪತ್ತೆ ಹಚ್ಚಿದರೆ ಒಪ್ಪಿಕೊಳ್ಳುವುದಿಲ್ಲ. ಹೀಗಾಗಿ ಸಮಾಜದಲ್ಲಿ ಮನೋರೋಗಿಗಳು ತುಂಬಾ ಸಹಜವಾಗಿ ಬಹಳ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನೋಡಿ ಸ್ವಾಮಿ ನಾವಿರೋದು ಹೀಗೆ ಅಂತ ಅವರೂ ಇರ್ತಾರೆ. ಅವರಿರೋದೇ ಹಾಗೆ ಅಂತ ಉಳಿದವರೂ ಇರ್ತಾರೆ.

ತನ್ನನ್ನು ತಾನು ಅರಿಯುವಂತಹ, ತನ್ನೊಳಗಿನ ಮತ್ತು ವಿಶ್ವದ ಆಂತರ್ಯದ ರಹಸ್ಯವನ್ನು ತಿಳಿಯುವಂತಹ ಆಧ್ಯಾತ್ಮದಲ್ಲಿ ಆತ್ಮ ಸಾಕ್ಷಾತ್ಕಾರ ಅತ್ಯಂತ ಮಹತ್ತರವಾದದ್ದು ಮತ್ತು ಉನ್ನತವಾದದ್ದು. ಹಾಗೆಯೇ ಯಾರೊಬ್ಬರೂ ವ್ಯಕ್ತಿಗತವಾಗಿ ಮತ್ತು ಸಾಮಾಜಿಕವಾಗಿ ತನ್ನನ್ನು ತಾನು ಮಾನಸಿಕ ನೆಲೆಯಿಂದ ತಿಳಿಯುವುದು ಮತ್ತು ಸಮಸ್ಯೆಗಳಿದ್ದಲ್ಲಿ ಪತ್ತೆ ಹಚ್ಚುವುದು, ರೋಗವಾಗಿದ್ದಲ್ಲಿ ಅದನ್ನು ಗುಣಪಡಿಸಿಕೊಳ್ಳೋದು ಬಹಳ ಮುಖ್ಯವಾದದ್ದು.

ಇದು ಆಧ್ಯಾತ್ಮಿಕ ಸಾಧನೆಗಿಂತಲೂ ಬಹಳ ಹೆಚ್ಚಿನದು ಎಂದು ನನ್ನ ಅಭಿಪ್ರಾಯ. ತಾನೂ, ತನ್ನೊಂದಿಗೆ ಇತರರು, ಕುಟುಂಬ, ಸಮಾಜ, ದೇಶ ಎಲ್ಲವೂ ಆರೋಗ್ಯವಾಗಿರಲು ಸಾಧ್ಯವಾಗುವುದು ಇದರಿಂದ ಎಂದೇ ನನ್ನ ಅಂಬೋಣ.

ಯಾವುದೇ ಒಬ್ಬ ವ್ಯಕ್ತಿಯು ತನ್ನನ್ನು ತಾನು ಮತ್ತು ಇತರರನ್ನು ಅವರವರ ವರ್ತನೆಗಳ, ಭಾವನೆಗಳ, ವಿಚಾರಗಳ, ಕ್ರಿಯೆ-ಪ್ರತಿಕ್ರಿಯೆಗಳ ಮೂಲಕ ಮನೋವೈಜ್ಞಾನಿಕವಾಗಿ ಅರಿಯುತ್ತಾನೋ ಆಗ ಅವನಿಗೆ ಸಮಸ್ಯೆಗಳನ್ನು, ಸಂಘರ್ಷಗಳ ಕಾರಣಗಳನ್ನು, ಸಂಬಂಧಗಳಲ್ಲಿನ ಬಿರುಕುಗಳನ್ನು, ಖಿನ್ನತೆಗೆ ಮೂಲಗಳನ್ನು, ಭಿನ್ನ ಮನಸ್ಥಿತಿಗಳನ್ನು ಅರಿಯಲು ಸಾಧ್ಯವಾಗುತ್ತದೆ. ಆಗ್ರಹ ತೋರುವ ಎಡೆಯಲ್ಲಿ ಅನುಕಂಪ ತೋರಲು ಸಾಧ್ಯವಾಗುತ್ತದೆ.

ದ್ವೇಷ ಸಾಧಿಸುವ ಬದಲು ಪ್ರೀತಿಸಲು ಸಾಧ್ಯವಾಗುತ್ತದೆ. ದೂರುವ ಬದಲು ತಿದ್ದಲು ಸಾಧ್ಯವಾಗುತ್ತದೆ. ದೂಷಿಸುವ ಬದಲು ಅರಿಯಲು ಸಾಧ್ಯವಾಗುತ್ತದೆ. ವ್ಯಕ್ತಿಯೊಬ್ಬನ ಮಾತಿಗೆ, ಕೃತ್ಯಕ್ಕೆ ಆತನನ್ನೇ ಎತ್ತಿ ಎಸೆಯುವ ಬದಲು, ಅವನ ಯಾವುದೋ ದೋಷಪೂರಿತ ಗುಣದ ಕಣವನ್ನು ಹೆಕ್ಕಿ ಎಸೆಯಲು ಸಾಧ್ಯವಾಗುತ್ತದೆ.

ಮೆತ್ತಿಕೊಂಡಿರುವ ಮಲಿನವನ್ನು ತೊಳೆಯಲು ಸಾಧ್ಯವಾಗುತ್ತದೆ. ಕಾಟ ಕೊಡುವ ಅವರ್ಯಾರದೋ ಹಟಕ್ಕೆ, ಮುಂದುವರಿಯಲು ಬಿಡದ ಇವರ್ಯಾರದೋ ಮೌಢ್ಯಕ್ಕೆ, ಎಷ್ಟೇ ತಿಳಿಯಾದ ತಿಳುವಳಿಕೆಯನ್ನು ನೀಡಿದರೂ ತಾವೆಂದಿಗೂ ಬಿಡದ ತಮ್ಮ ವಾದಕ್ಕೆ ಕಾರಣಗಳು ತಿಳಿಯುತ್ತವೆ.

ಹೀಗೆ ಮನೋವಿಜ್ಞಾನವು ವ್ಯಕ್ತಿಯ ಮತ್ತು ಸಮಾಜದ ಹೂರಣವನ್ನು ಅರಿವಿಗೆ ತರುತ್ತಾ ವ್ಯಕ್ತಿಗತವಾದ ಮಾನಸಿಕ ಮತ್ತು ಸಾಮಾಜಿಕ ಆರೋಗ್ಯವನ್ನು ಕಾಪಾಡುವುದರಲ್ಲಿ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆ. ಯಾವುದೇ ಸಮಾಜದ ಮಟ್ಟಿಗಾದರೂ ರಾಕೆಟ್ ವಿಜ್ಞಾನವು ಮನೋವಿಜ್ಞಾನದ ಅಗತ್ಯದ ಮುಂದೆ ಮೊದಲನೆಯ ಪ್ರಾಧಾನ್ಯತೆ ಆಗಲಾರದು ಎಂಬುದು ನನ್ನ ಗ್ರಹಿಕೆ.

ಇರಲಿ, ತನ್ನಲ್ಲಿ ಮತ್ತು ಇತರರಲ್ಲಿ ರೋಗಲಕ್ಷಣಗಳನ್ನು ಕಂಡುಕೊಂಡು, ಎಚ್ಚೆತ್ತುಕೊಂಡು ಮಾನಸಿಕವಾಗಿ ಎಲ್ಲರೂ ಗುಣಮುಖರಾಗಲಿ ಎಂಬುದೇ ಈ ಲೇಖನಮಾಲೆಯ ಉದ್ದೇಶ.

ಮನೋರೋಗಕ್ಕೆ ನಾನಾ ಕಾರಣಗಳಿದ್ದಂತೆ, ನಾನಾ ಆಯಾಮಗಳೂ, ಮುಖಗಳೂ, ರೀತಿಗಳೂ ಇವೆ. ಯಾವುದೇ ಆದರೂ ಗುರುತು ಹಚ್ಚಲು ಸಾಕಷ್ಟು ಸಾಧ್ಯವಿದೆ. ಮಾನಸಿಕ, ಭಾವನಾತ್ಮಕ ಮತ್ತು ಸಾಂದರ್ಭಿಕ ಸಮಸ್ಯೆಗಳು ಮನೋರೋಗವಾಗಿ ಉಲ್ಬಣಿಸುವ ಮುನ್ನವೇ ಎಚ್ಚೆತ್ತುಕೊಳ್ಳುವ ಮತ್ತು ಉಪಚರಿಸಿಕೊಳ್ಳುವ ಅಗತ್ಯವಿದೆ.

ಮನೋರೋಗಕ್ಕೆ ಮದ್ದಿಲ್ಲ ಎಂಬ ಗಾದೆಯ ಮಾತು ತಿಳಿವಿನ ಕಾಲ ಪಕ್ವವಾಗಿಲ್ಲದಿದ್ದಾಗ ಹುಟ್ಟಿದೆ. ಆದರೆ ಇಂದು ಹಾಗಿಲ್ಲ. ವೇದ ಸುಳ್ಳಾದರೂ ಗಾದೆ ಸುಳ್ಳಲ್ಲ ಎಂಬುದೇನೂ ನಿಜವಲ್ಲ. ಆಯಾ ಕಾಲಘಟ್ಟದಲ್ಲಿ, ಆಯಾ ವ್ಯವಸ್ಥೆಗಳಿಗೆ ಅನುಗುಣವಾಗಿ ಹುಟ್ಟಿರುವ ಗಾದೆಗಳು ಎಲ್ಲ ಕಾಲಕ್ಕೂ ಸಲ್ಲುವುದಿಲ್ಲ. ಇರಲಿ, ಸಧ್ಯಕ್ಕೆ ಇಷ್ಟು ನಂಬೋಣ.

ಯಾವುದೇ ಮನೋರೋಗಕ್ಕೆ ಮದ್ದಿದೆ. ಆದರೆ ಗುರುತಿಸಬೇಕು, ಒಪ್ಪಿಕೊಳ್ಳಬೇಕು ಮತ್ತು ಚಿಕಿತ್ಸೆ ನೀಡಬೇಕು. ವ್ಯಕ್ತಿಗತವಾಗಿ ಒಬ್ಬ ಮಾನಸಿಕವಾಗಿ ಆರೋಗ್ಯವಂತನಾದರೆ ಅವನು ಆರೋಗ್ಯಕರವಾದಂತಹ ಪರಿಸರ ನಿರ್ಮಿಸುವುದರಲ್ಲಿ, ಆರೋಗ್ಯಕರವಾದಂತಹ ವಾತಾವರಣವನ್ನು ಮೂಡಿಸುವುದರಲ್ಲಿ ತನ್ನ ಪಾತ್ರ ನಿರ್ವಹಿಸುತ್ತಾನೆ. ತಾನೂ ನೆಮ್ಮದಿಯಾಗಿ ಬಾಳುತ್ತಾನೆ, ಇತರರನ್ನೂ ಬಾಳಗೊಡುತ್ತಾನೆ.

(ಮುಂದುವರಿಯುತ್ತದೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಮರೆಯಾದ ಅಪೂರ್ವ ಚಿತ್ರಕಲಾ ಪ್ರತಿಭೆ ‘ಶೋಭಾ ಕರಣಿಕ್’

Published

on

ಶೋಭಾ ಕರಣಿಕ್
  • ಡಾ.ಎನ್.ಕೆ.ಪದ್ಮನಾಭ, ಸಹಾಯಕ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ,ಉಜಿರೆ

ವರು ಬಿಡಿಸುತ್ತಿದ್ದ ರೇಖೆಗಳು ನಮ್ಮ ದೇಶೀ ಸಂಸ್ಕೃತಿಯ ವಕ್ತಾರಿಕೆಯ ಪಾತ್ರ ನಿರ್ವಹಿಸುತ್ತಿದ್ದವು. ಕನ್ನಡದ್ದೇ ಆದ ಕಲಾತ್ಮಕ ಪರಂಪರೆಯನ್ನು ಸೂಕ್ಷ್ಮವಾಗಿ ಗ್ರಹಿಸಿದ್ದ ಅವರ ಚಿತ್ರಗಳು ಜೀವಂತಿಕೆಯ ಗುಣಲಕ್ಷಣದೊಂದಿಗೆ ಕಂಗೊಳಿಸುತ್ತಿದ್ದವು.

ಸಾಂಪ್ರದಾಯಿಕ ಚಿತ್ರಶೈಲಿಯನ್ನು ಆಧುನಿಕ ಅಗತ್ಯಗಳಿಗೆ ತಕ್ಕಂತೆ ಮಣಿಸಿ ಪರಂಪರೆಯೊಳಗೇ ಅಡಗಿದ್ದ ಮೌಲಿಕ ಮಾದರಿಗಳನ್ನು ಮನಗಾಣಿಸುವ ಶ್ರದ್ಧೆಯೊಂದಿಗೇ ಅವರು ಚಿತ್ರವಿನ್ಯಾಸ ರೂಪಿಸುತ್ತಿದ್ದರು. ಇನ್ಸ್ಟಾಗ್ರಾಮ್, ಫೇಸ್‌ಬುಕ್ ಮತ್ತಿತರ ಮಾಧ್ಯಮಗಳ ಮೂಲಕ ತಮ್ಮ ಚಿತ್ರಗಳನ್ನು ಕಾಣಿಸುತ್ತಿದ್ದರು. ಪರಂಪರೆ ಮತ್ತು ವರ್ತಮಾನವನ್ನು ಬೆಸೆದು ಹೊಸ ಬಗೆಯ ಚಿತ್ರಪ್ರಯೋಗಗಳನ್ನು ನಡೆಸುವ ಹುಮ್ಮಸ್ಸಿನೊಂದಿಗೆ ಚಿತ್ರಕಲಾಯಾನ ಮುಂದುವರೆಸಿದ್ದರು. ಅವರ ಹೆಸರು ಶೋಭಾ ಕರಣಿಕ್.

ಇತ್ತೀಚೆಗಷ್ಟೇ ಅವರ ಚಿತ್ರಕಲಾಯಾನ ನಿಂತಿತು. ಅವರ ನಿಧನವು ವಿನೂತನವಾದ ಪ್ರಯೋಗಶೀಲ ಚಿತ್ರಕಲಾ ಸಾಧ್ಯತೆಗಳನ್ನು ತಡೆದು ನಿಲ್ಲಿಸಿತು. ಪುರಾಣದ ಕಥನ ಪ್ರಸಂಗಗಳಲ್ಲಿ ಉಲ್ಲೇಖಿತ ದೇವರು-ದೇವತೆಗಳ ಅಸ್ಮಿತೆ ಮತ್ತು ದೇಸೀ ಸಂಸ್ಕೃತಿಯನ್ನು ಬಿಂಬಿಸುವ ವಿನ್ಯಾಸಗಳನ್ನು ಸಮನ್ವಯಗೊಳಿಸಿ ಚಿತ್ರಕಲೆಗೆ ಹೊಸ ಆಯಾಮ ತಂದುಕೊಟ್ಟ ಪ್ರತಿಭೆಯಾಗಿ ಶೋಭಾ ಕರಣಿಕ್ ಅವರದ್ದು ವಿಶೇಷ ವ್ಯಕ್ತಿತ್ವವಾಗಿತ್ತು. ಮ್ಯೂರಲ್ ಪೇಂಟಿಂಗ್‌ನಲ್ಲಿ ಅವರಿಗಿದ್ದ ಪರಿಣತಿ, ಉತ್ತರ ಕನ್ನಡದ ಕಾವಿ ಕಲೆಯ ಕುರಿತಾದ ವಿಸ್ತೃತ ಜ್ಞಾನವು ಚಿತ್ರಕಲೆಯನ್ನು ಉನ್ನತೀಕರಿಸುವುದಕ್ಕೆ ಅವರಿಗೆ ನೆರವಾಗಿತ್ತು.

ಕಲೆಯ ಜೊತೆಗಿನ ಅನುಸಂಧಾನದ ಕ್ಷಣಗಳು ಅಪೂರ್ವ. ಒಂದು ನಿರ್ದಿಷ್ಟ ನಿರ್ಣಾಯಕ ಸಂದರ್ಭ, ಸಮಯದಲ್ಲಿ ಕಲೆಯೊಂದು ವ್ಯಕ್ತಿತ್ವವನ್ನು ಪ್ರಭಾವಿಸಿ ಸೃಜನಶೀಲತೆಯ ಹಸಿವನ್ನು ನೆಲೆಗೊಳಿಸುವುದಕ್ಕೆ ಪ್ರೇರಣೆಯಾಗುತ್ತದೆ. ಕಲೆಯ ಪ್ರಭಾವ ಎರಡು ಬಗೆಯದ್ದು. ಸಹೃದಯರನ್ನು ತನ್ನ ಕಲಾತ್ಮಕ ಮಾದರಿಗಳಿಂದ ಸೆಳೆದು ಅವರೊಳಗೆ ವಿಶೇಷ ಅನುಭೂತಿ ಧಾರೆ ಎರೆಯುವಂಥದ್ದು ಒಂದು ಬಗೆಯಾದರೆ ಹೀಗೆ ಸೆಳೆದುಕೊಂಡು ಮತ್ತೆ ಮತ್ತೆ ಪ್ರಭಾವಿಸುತ್ತಾ ಸಹೃದಯರನ್ನೇ ಕಲಾವಿದರನ್ನಾಗಿಸುವ ಸಾಧ್ಯತೆ ಮತ್ತೊಂದು ತೆರನಾದದ್ದು.

ಈ ಕಾರಣಕ್ಕಾಗಿಯೇ ಕಲಾತ್ಮಕ ಸಂಭವನೀಯತೆಯು ಅನನ್ಯವೆನ್ನಿಸಿಕೊಂಡಿದೆ. ಇಂಥ ಅನನ್ಯತೆಯೊಂದಿಗೇ ಶೋಭಾ ಕರಣಿಕ್ ಗುರುತಿಸಿಕೊಂಡಿದ್ದರು. ಅವರು ಓದಿದ್ದು ತಾಂತ್ರಿಕ ವಿಜ್ಞಾನ. ಆದರೆ, ಅವರ ನಿಜದ ಪ್ರತಿಭೆ ಅಭಿವ್ಯಕ್ತವಾದದ್ದು ಚಿತ್ರಕಲೆಯ ಮೂಲಕ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರಿಸರದಲ್ಲಿ ಬೆಳೆದ ಶೋಭಾ ಕರಣಿಕ್ ಮೊದಲಿನಿಂದಲೂ ದೇಶೀ ಕಲೆಯ ಕುರಿತು ವಿಶೇಷ ಆಸಕ್ತಿಯನ್ನು ಬೆಳೆಸಿಕೊಂಡು ಬಂದಿದ್ದರು. ಹೈಸ್ಕೂಲ್ ಓದುತ್ತಿರುವಾಗಲೇ ಕಾವಿಕಲೆಯ ವಿನ್ಯಾಸ ಅವರನ್ನು ಸೆಳೆದಿತ್ತು. ಇವುಗಳನ್ನು ಮತ್ತೆ ಮತ್ತೆ ನೋಡುತ್ತಾ ಹೋದಂತೆಲ್ಲಾ ಕಾವಿ ಕಲೆಯ ಕುರಿತ ಆಕರ್ಷಣೆ ಕಲಿಕೆಯ ಹಂಬಲವಾಗಿ ಮಾರ್ಪಟ್ಟಿತು. ಉತ್ತರ ಕನ್ನಡದ ಟೆಂಪಲ್ ರ‍್ಟ್ ಪ್ರಕಾರದ ಭಾಗವಾಗಿ ಕಾವಿ ಕಲೆಯನ್ನು ಪರಿಚಯಿಸುವ ದೃಷ್ಟಿಯಿಂದ ಅವರು ರಚಿಸಿದ್ದ ತರಹೇವಾರಿ ವಿನ್ಯಾಸಗಳು ವಿವಿಧ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮಗಳಲ್ಲಿ ಗಮನ ಸೆಳೆದಿದ್ದವು.

ಕಾವಿ ಕಲೆಯೂ ಸೇರಿದಂತೆ ನಮ್ಮ ಸಾಂಪ್ರದಾಯಿಕ ಕಲೆಗಳು ಈ ಹಿಂದಿನ ಕಾಲದ ತಲೆಮಾರನ್ನಷ್ಟೇ ಪ್ರಭಾವಿಸಿದ್ದಲ್ಲದೇ ನಂತರದ ಹೊಸ ಪೀಳಿಗೆಯನ್ನೂ ಆಕರ್ಷಿಸುವ ಗುಣ ಹೊಂದಿವೆ. ಮೂಲ ಅಂತಃಸತ್ವಕ್ಕೆ ಧಕ್ಕೆಯೊದಗದ ಹಾಗೆ ಹೊಸ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಈ ಸಾಂಪ್ರದಾಯಿಕ ಚಿತ್ರಕಲಾ ವಿನ್ಯಾಸಗಳನ್ನು ಮರುರೂಪಿಸಬಹುದು. ಹೊಸ ಕಾಲದಲ್ಲಿ ಅವುಗಳ ಮಹತ್ವವನ್ನು ಮನಗಾಣಿಸಬಹುದು ಎಂಬುದು ಅವರ ಆಶಯವಾಗಿತ್ತು.

ಕಲೆಯೊಂದು ಒಂದು ಕಾಲದಿಂದ ಮತ್ತೊಂದು ಕಾಲಕ್ಕೆ ದಾಟಿಕೊಳ್ಳುವಾಗ ಪಲ್ಲಟಗಳು ಸಹಜ. ಈ ಪಲ್ಲಟಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಇಂತಹ ಕಲೆಗಳಿಗೆ ಹೊಸಕಾಲದಲ್ಲೂ ಜೀವಂತಿಕೆಯನ್ನು ತಂದುಕೊಡುವ ಪ್ರಯತ್ನದ ಅಗತ್ಯವನ್ನು ಮನಗಾಣಿಸುವುದಕ್ಕಾಗಿಯೇ ಶೋಭಾ ಕರಣಿಕ್ ಅವರು ಚಿತ್ರಕಲಾ ರಚನೆಯ ವೈವಿಧ್ಯಮಯ ಪ್ರಯೋಗಗಳಲ್ಲಿ ತೊಡಗಿಸಿಕೊಂಡಿದ್ದರು.

ಅವರ ನಿಧನದಿಂದ ಈ ಪ್ರಯೋಗಶೀಲ ಹೆಜ್ಜೆಗಳು ನಿಂತಂತಾಗಿವೆ. ಆದರೆ, ಅವರು ಪರಂಪರೆ ಮತ್ತು ವರ್ತಮಾನವನ್ನು ಸಮನ್ವಯಗೊಳಿಸಿ ಸಾಬೀತುಪಡಿಸಿದ ಅಪೂರ್ವ ಚಿತ್ರಕಲಾ ಪ್ರಯೋಗಶೀಲತೆಯ ಜೀವಂತಿಕೆ ಹೊಸ ಪೀಳಿಗೆಗೆ ಸದಾ ಸ್ಫೂರ್ತಿಯ ಸೆಲೆಯಾಗಿರುತ್ತದೆ. ಅವರ ಹೆಸರಿನ ಇನಸ್ಟಾಗ್ರಾಂನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳು ಇಂಥ ಸ್ಫೂರ್ತಿಯ ಪ್ರಭೆಯನ್ನು ದಾಟಿಸುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಹೊಸತನದ ಹೊಸ್ತಿಲಲ್ಲಿ..!

Published

on

ಬರಹ : ಮೀನಾಕ್ಷಿ. ಬಿ
  • ಮೀನಾಕ್ಷಿ .ಬಿ, ಎಂ. ಎ ವಿದ್ಯಾರ್ಥಿನಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ದಾವಣಗೆರೆ ವಿಶ್ವವಿದ್ಯಾಲಯ

ಹೊಸವರ್ಷ ವೆಂಬುದು ಪ್ರತಿಯೊಬ್ಬರ ಬಾಳಲ್ಲಿ ವರ್ಷಕ್ಕೊಮ್ಮೆ ಬರುವ ಹೊಸದಿನಗಳ ಆಗಮನ ಯಾಕೆಂದರೆ ಹೊಸತನವನ್ನು ತರುತ್ತಾ ಇರುವ ಹೊಸವರ್ಷ ಕೂಡ ಒಂದು ಜೀವನದ ಭರವಸೆ, ನಿರೀಕ್ಷೆ ಕನಸುಗಳ ಬಂಡಿಯ ಮೇಲೆ ಸಾಗುವ ಪ್ರಯಾಣ ನಮ್ಮ ಜೀವನ.

ವ್ಯಕ್ತಿಯ ನಂಬಿಕೆಯ ಆಧಾರದ ಮೇಲೆಯೇ ಜೀವನ ಸಾಗುಸುತ್ತಿರುವುದು.ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿಯೂ ಕೂಡ ಕಷ್ಟ -ಸುಖ ದುಃಖದ ಸಂಗತಿಗಳು ಇದ್ದೆ ಇರುತ್ತದೆ. ಕೆಲವೊಂದು ಬಾರಿ ಹತಾಶೆಯನ್ನು ಹೊಂದಿ ಜೀವನದಲ್ಲಿ ಜಿಗುಪ್ಸೆ ಒಂದು ಕೆಟ್ಟ ನಿರ್ಧಾರಕ್ಕೆ ಮನಸ್ಸು ದಾರಿ ಮಾಡಿಕೊಡುತ್ತದೆ. ಹಾಗೆಯೇ ಕಷ್ಟ ಇದ್ದಲ್ಲಿ ಸುಖವಿರುವುದುಂಟು ಅನ್ನುವ ಹಾಗೇ ಇವತ್ತಲ್ಲ ನಾಳೆ ಒಳ್ಳೆಯ ದಿನಗಳು ನಮ್ಮ ಜೀವನದಲ್ಲಿ ಬರಬಹುದೆಂಬ ಭರವಸೆ,ಆತ್ಮವಿಶ್ವಾಸವನ್ನು ಇಟ್ಟುಕೊಂಡು ಜೀವನ ನಡೆಸುತ್ತಲೇ ಇದ್ದೇವೆ.

ಈ ವರ್ಷ ಒಳ್ಳೆಯದಾಗಿಲ್ಲ ಅಂದರೆ ಏನು ಮುಂದಿನ ವರ್ಷ ಆದರೂ ನನ್ನ ಬದುಕು ಬದಲಾಗಬಹುದು ಎಂಬ ಹೊಸತನವನ್ನು ನಮ್ಮಲ್ಲಿ ಭರವಸೆ,ನಂಬಿಕೆಯ ಬೇರಿನೊಂದಿಗೆ ಬೆರೆಸಿಕೊಂಡು ಬದುಕಬೇಕು.ನಾಳೆಯ ದಿನಗಳ ಮೇಲಿನ ಅನಿರೀಕ್ಷಿತ ತೀರಿವಿನಿಂದಾಗುವ ಬದುಕಿನಲ್ಲಾಗುವ ಬದಲಾವಣೆ ಹೊಸತನದ ಚಾಪನ್ನು ಮೂಡಿಸುತ್ತದೆ.
ಎಂಥ ಹತಾಶ ಮನಸ್ಥಿತಿಯವರಲ್ಲೂ ಹೊಸವರ್ಷ ಭರವಸೆಯ ಅಭಯ ಹಸ್ತವನ್ನು ಚಾಚುತ್ತದೆ. ಅದೆಲ್ಲಿಂದಲೇ ಆತ್ಮ ವಿಶ್ವಾಸದ ಬೆಳಕಿನ ಕಿಡಿಯೊಂದು ಕಾಣಿಸಿಕೊಳ್ಳುತ್ತದೆ.

ಹೊಸವರ್ಷವೆಂಬುದು ಕೇವಲ ಸಂಭ್ರಮದ ಕಾಲ ಮಾತ್ರವಲ್ಲ. ಕಳೆದ ದಿನಗಳತ್ತ ಹಿಂತಿರುಗಿ ನೋಡುವ ಸಮಯ ಕೂಡ ಹಿಂದಿನ ದಿನಗಳ ಪುಟಗಳನ್ನು ತೆಗೆದು ನೋಡಿದರೆ. ಉತ್ಸಾಹದ ಗಳಿಗೆಗಳು ಮುಂದಿನ ಕೆಲಸಗಳಿಗೆ ಚೈತನ್ಯ, ಉತ್ಸಾಹ ನೀಡಬಲ್ಲದು.ನಮ್ಮ ದಿಕ್ಕಿಲ್ಲದ ದಾರಿಗೆ ಖಚಿತ ದಿಕ್ಕು ದಾರಿಯನ್ನು ತೋರಬಲ್ಲದು.

ಜೀವನದ ಪ್ರಯಾಣಕ್ಕೆ ಒಂದು ನಿಲ್ದಾಣವಾಗಿದೆ. ನಾವು ಕಾಣುವ ಕನಸಗಳು ಕನಸಾಗಿಯೇ ಉಳಿದಿದೆ ಯಾಕೆಂದರೆ ನಮ್ಮಲ್ಲಿನ ಬೇಜವಾಬ್ದಾರಿ, ನಿರ್ಲಕ್ಷತನ ಆಮೇಲೆ ಮಾಡಿದರೆ ಆಯ್ತು ಅನ್ನೋ ಮನೋಭಾವನೆ ಯಾವುದರ ಬಗ್ಗೆಯೂ ಆಸಕ್ತಿ ಕೊಡದೆ ಇರೋದು ಎಲ್ಲವು ನಮ್ಮ ಕನಸಿನ ಜೀವನ ರೂಪಿಸಿಕೊಳ್ಳುವಲ್ಲಿ ಸಫಲರಾಗದೆ ಉಳಿಯಲು ಕಾರಣ.

ಮೊದಲು ಆತ್ಮವಿಶ್ವಾಸ ಬೇಕು ನಾನು ಈ ಕೆಲಸವನ್ನು ಮಾಡುವೆ ಎಂಬ ಒಂದು ನಿರ್ಧಿಷ್ಟ ಗುರಿ ಇರಬೇಕು ಅಂಗಿದ್ರೆ ಅಷ್ಟೇ ಜೀವನದ ಪಯಣದ ಹಾದಿಯಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಇಲ್ಲವಾದಲ್ಲಿ ಸೋಲನ್ನು ಅನುಭವಿಸುವ ಪರಿಸ್ಥಿತಿ ಎದುರಾಗುತ್ತದೆ. ಮುಂದಿನ ದಿನಗಳ ಆಗಮನದೊಂದಿಗೆ ನಾವು ಕಂಡ ಕನಸನ್ನು ಈಡೇರಿಸಿಕೊಳ್ಳುವ ಸತತ ಪ್ರಯತ್ನದೊಂದಿಗೆ ಬರುವ ದಿನವನ್ನು ಸ್ವಾಗತಿಸಿಕೊಳ್ಳೋಣ.
ಎಲ್ಲರ ಬಾಳಲಿ ಹರುಷ ,ಸಂತೋಷ ಮನೆಮಾಡಲಿ ಎಂದು ಆಶಿಸುತ್ತಾ ಎಲ್ಲರಿಗೂ ಹೊಸವರ್ಷದ ಶುಭಾಶಯಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕಾಮರೂಪದ ಪ್ರಭಾಕರ

Published

on

  • ಪ್ರೊ.ರಹಮತ್ ತರೀಕೆರೆ

ನಾನು ಕೋಲಾರಕ್ಕೆ ಹೋದಾಗೆಲ್ಲ ಎರಡು ಜಾಗಗಳಿಗೆ ತಪ್ಪದೆ ಭೇಟಿ ಕೊಡುತ್ತೇನೆ. ಒಂದು-ಕೆ.ರಾಮಯ್ಯ ಮತ್ತವರ ಸಂಗಾತಿಗಳು ಸೇರಿ ತೇರುಹಳ್ಳಿ ಬೆಟ್ಟದ ಮೇಲೆ ಕಟ್ಟಿರುವ `ಆದಿಮ’ಕ್ಕೆ; ಇನ್ನೊಂದು-`ಕಾಮರೂಪಿ’ ಎಂಬ ಹೆಸರಲ್ಲಿ ಬರೆಯುತ್ತಿದ್ದ ಕನ್ನಡ ಲೇಖಕ ಡಾ. ಎಂ.ಎಸ್. ಪ್ರಭಾಕರ ಅವರಿರುವ ಕಠಾರಿಪಾಳ್ಯದ ಮನೆಗೆ. 50ರ ದಶಕದ ಕೊನೆಯಲ್ಲಿ ಕರ್ನಾಟಕ ಬಿಟ್ಟುಹೋದ ಪ್ರಭಾಕರ, ‘ಹಿಂದೂ’ ಪತ್ರಿಕೆಯ ವರದಿಗಾರರಾಗಿ ಆಫ್ರಿಕಾ ಅಮೇರಿಕ ಬಾಂಗ್ಲಾದೇಶ ಈಶಾನ್ಯ ಭಾರತವನ್ನೆಲ್ಲ ಅಲೆದಾಡಿ, ಕಡೆಗೆ ಕಾಮರೂಪದಲ್ಲಿ (ಅಸ್ಸಾಮಿನ ಪುರಾತನ ಹೆಸರಿದು) ನೆಲೆಸಿಬಿಟ್ಟರು.

`ಕಾಮರೂಪ’ ಶಬ್ದಕ್ಕೆ ಬಯಸಿದ ರೂಪಧಾರಣೆ ಮಾಡುವ ಮಾಯಾವಿ ವಿದ್ಯೆ ಎಂಬರ್ಥವೂ ಇದೆ. ಎಂಬತ್ತರ ಪ್ರಾಯದಲ್ಲಿ ಕರ್ನಾಟಕಕ್ಕೆ ಮರಳಿ ಬಂದಿರುವ ಪ್ರಭಾಕರ ಅವರು, ತಾವು ಹುಟ್ಟಿಬೆಳೆದ ಮನೆಯಲ್ಲಿ ಬಿಡಾರ ಹೂಡಿದ್ದಾರೆ. ಹಿರೀಕರು ಕಟ್ಟಿದ ದೊಡ್ಡಮನೆ. ಮನೆಯೊಳಗೊಂದೇ ಜೀವ; ಮನೆ ತುಂಬ ಪುಸ್ತಕದ ರಾಶಿ (ಹೆಚ್ಚಿನವು ಇಂಗ್ಲೀಶ್ ಬಂಗಾಳಿ ಅಸ್ಸಾಮಿ). ನಟ್ಟನಡುವಿರುವ ಹಾಲಿನ ಮೂಲೆಯಲ್ಲಿ ಬೀದಿಗೆ ಬೆನ್ನುಕೊಟ್ಟಂತೆ ಕೂತು, ಲ್ಯಾಪ್‌ಟಾಪಿನಲ್ಲಿ ಬರೆಯುತ್ತ, ವೆಬ್‌ಸೈಟುಗಳನ್ನು ಜಾಲಾಡುತ್ತ, ಬ್ಲಾಗುಗಳನ್ನೋದುತ್ತ ಪ್ರಭಾಕರ ಕುಳಿತಿರುತ್ತಾರೆ.

ಅವರ ಮನಗೆ ಹೋದಾಗಲೆಲ್ಲ ನನಗೆ ರಾಗಿಮುದ್ದೆ ಸೊಪ್ಪಿನ ಸಾರಿನ ಊಟ ಸಿಗುತ್ತದೆ. ಅವರು ಉಣ್ಣುವುದೊಂದು ಅಪೂರ್ವ ದೃಶ್ಯ. ತಣಿಗೆಯ ನಡುವೆ ಹದವಾಗಿ ಬೆಂದು ಕಂಪು ಬೀರುವ ಗೋಂದಿನಂತಹ ಕೆಂಗಪ್ಪು ಬಣ್ಣದ ಬಿಸಿಮುದ್ದೆಯನ್ನಿಟ್ಟು, ಅದರ ತಲೆಯ ಮೇಲೆ ಶಿಖರವನ್ನು ಹಿಮವು ಅಲಂಕರಿಸುವಂತೆ ಬೆಣ್ಣೆಯ ಚೂರನ್ನಿಡುತ್ತಾರೆ; ಬೆಣ್ಣೆಯು ಮುದ್ದೆ ಕಾವಿಗೆ ಕರಗಿ ಇಡೀ ಚೆಂಡನ್ನು ಆವರಿಸಿ ಅಭಿಷೇಕ ಮಾಡಿಸಿಕೊಂಡ ಮೂರುತಿಯಂತೆ ಥಳಥಳ ಹೊಳೆಯುತ್ತದೆ. ಆಗ ಘಮಿಸುವ ಮುದ್ದೆಯನ್ನು ಚೆನ್ನಾಗಿ ಮಿದ್ದು, ಒಂದು ಬದಿಯಿಂದ ಇಷ್ಟಿಷ್ಟೇ ಮುರಿದು ತುತ್ತು ಮಾಡಿ, ಸೊಪ್ಪಿನ ಗಟ್ಟಿಸಾರಲ್ಲಿ ಹೊರಳಾಡಿಸಿ ಗುಕ್ಕನೆ ನುಂಗಿ ಕಣ್ಮುಚ್ಚಿ ಕೊಳ್ಳುತ್ತಾರೆ. ತರುವಾಯ ಶ್ರೀಯುತರು ಜ್ಞಾನೋದಯವಾದ ಸಿದ್ಧನಂತೆ ಅವರ ಮುಖದಲ್ಲಿ ಪರಮಾನಂದದ ಒಂದು ಕಳೆ ಆವಿರ್ಭವಿಸುತ್ತದೆ. ಇದನ್ನೆಲ್ಲ ಕಾಣುವಾಗ, ಲೋಕವನ್ನೆಲ್ಲ ಸುತ್ತಾಡಿರುವ ಇವರು ಕೋಲಾರಕ್ಕೆ ಮುದ್ದೆಸುಖಕ್ಕಾಗಿಯೆ ಬಂದರೇನೊ ಎಂದು ಶಂಕೆ ಬರುತ್ತದೆ. ಪ್ರಭಾಕರ ಅವರಿಗೆ ಆಧುನಿಕ ಕನ್ನಡ ಸಾಹಿತ್ಯದ ಮೇಲೆ ಅನೇಕ ದೂರುಗಳಿವೆ. ಅವುಗಳಲ್ಲಿ ಆಹಾರ ತಯಾರಿಕೆ ಮತ್ತು ಸೇವನೆ ಕುರಿತು ಅದರಲ್ಲಿ ವಿವರಗಳೇ ಇಲ್ಲ ಎಂಬುದೂ ಒಂದು.

ಕನ್ನಡದ ಅತಿಹಿರಿಯ ಮತ್ತು ಹೆಚ್ಚು ಬರೆಯದ ಲೇಖಕರಲ್ಲಿ ಪ್ರಭಾಕರ ಅವರೂ ಒಬ್ಬರು. ನಾನು ಅವರ ‘ಕುದುರೆಮೊಟ್ಟೆ’ ಕಾದಂಬರಿಯನ್ನೂ ‘ಒಂದು ತೊಲ ಪುನುಗು ಮತ್ತು ಇತರ ಕತೆಗಳು’ ಸಂಕಲನವನ್ನೂ ಓದಿದ್ದೆ. ಇವುಗಳಲ್ಲಿ ‘ಕುದುರೆ ಮೊಟ್ಟೆ’ ಈಗಲೂ ಪ್ರಿಯವಾದ ಪುಸ್ತಕ. ಅದರಲ್ಲಿರುವ ಕೆಲವು ಪಾತ್ರಗಳು ಕೊಂಚ ವಿಕ್ಷಿಪ್ತವಾಗಿವೆ; ಅಲ್ಲಿನ ಬಾಳಿನ ಸನ್ನಿವೇಶಗಳೂ ಅನಿರೀಕ್ಷಿತವಾಗಿವೆ. ಆದರೆ ಎಲ್ಲಿಯೂ ಹುಸಿ ಅನಿಸದಂತೆ, ಒಂದೇ ಶಬ್ದ ಅಪವ್ಯಯವಾಗದಂತೆ ಅದನ್ನು ಬರೆಯಲಾಗಿದೆ. ಪಾತ್ರಗಳನ್ನು ತಮ್ಮ ಸಿದ್ಧಾಂತಕ್ಕೆ ತಕ್ಕಂತೆ ಮಣಿಸಿ ಕೈಗೊಂಬೆಯಂತೆ ಆಡಿಸುತ್ತ, ಕೆಲವನ್ನು ಮುದ್ದಾಮಾಗಿ ದುರುಳಗೊಳಿಸಿ ಕಲೆಯ ಜಾಣಮುಸುಕಿನಲ್ಲಿ ಅಡಗಿಸುತ್ತ, ಕೆಲವು ಕಾದಂಬರಿಗಳು ಕನ್ನಡದಲ್ಲಿ ಪ್ರಕಟವಾಗುತ್ತಿವೆ. ಇಂತಹ ಹೊತ್ತಲ್ಲಿ ಅರ್ಧ ಶತಮಾನದ ಹಿಂದೆ ಪ್ರಕಟವಾದ ಈ ಕಾದಂಬರಿ, ಬಾಳನ್ನು ಕುರಿತು ತೋರುವ ಕಕ್ಕುಲಾತಿ ಕಂಡು ಖುಶಿಯಾಗುತ್ತದೆ. ಕತೆಗಾರರಿಗೆ ತಾವು ಸೃಷ್ಟಿಸುವ ಕೆಲವು ಪಾತ್ರಗಳ ಮೇಲೆ ಕೊಂಚ ಭಾವ ಪಕ್ಷಪಾತವಿರುತ್ತದೆ. ಆದರೆ ತಾವು ಸೃಜಿಸುವ ಎಲ್ಲ ಪಾತ್ರಗಳನ್ನು ತಾಯಿಯಂತೆ ನೋಡುವುದು ಬರೆಹದ ನೈತಿಕತೆ. ಈ ಸಂಗತಿ ಕುವೆಂಪು ಮತ್ತು ಟಾಲ್ ಸ್ಟಾಯ್ ಕಾದಂಬರಿ ಓದಿದವರಿಗೆ ಗೊತ್ತಿದೆ.

ಕಾಮವನ್ನು ಇಟ್ಟುಕೊಂಡು ಜೀವನದ ಸತ್ಯಗಳನ್ನು ಶೋಧಿಸುವ ವಿಷಯದಲ್ಲಿ ಕಾಮರೂಪಿಯವರು, ಒಬ್ಬ ಟಿಪಿಕಲ್ ನವ್ಯಲೇಖಕರೇ. ಆದರೆ ನವ್ಯದ ಕೆಲವು ಲೇಖಕರಲ್ಲಿ ಕಾಣುವಂತೆ, ಅದಕ್ಕವರು ಅನಗತ್ಯ ಪ್ರಾಮುಖ್ಯ ಕೊಡುವುದಿಲ್ಲ. ಅದನ್ನು ಚಪ್ಪರಿಸುವುದಿಲ್ಲ. ವೈಭವೀಕರಿಸುವುದಿಲ್ಲ. ಬದಲಿಗೆ, ಮನುಷ್ಯರಾದವರು ಜೀವನದ ಇಕ್ಕಟ್ಟುಗಳಲ್ಲಿ ಸಿಲುಕಿ ಅನಿವಾರ್ಯವಾಗಿ ವರ್ತಿಸುವ ಪರಿಯನ್ನು ತಣ್ಣಗೆ ವ್ಯಂಗ್ಯವಾಗಿ ಚಿತ್ರಿಸುತ್ತಾ ಹೋಗುತ್ತಾರೆ. ಸತ್ಯಕ್ಕಿರುವ ಹಲವು ಮುಖಗಳನ್ನು ಹಿಡಿಯುವಂತಹ ಕುರುಸೋವಾನ ‘ರಶೋಮನ್’ ಸಿನಿಮಾ ನೆನಪಿಸುವ ಈ ಕಾದಂಬರಿ, ಮತ್ತೆಮತ್ತೆ ಓದಬೇಕು ಎನಿಸುವಷ್ಟು ತಾಜಾ ಆಗಿದೆ. ‘ಉಪಪತ್ತಿಯೋಗ’ ಎಂಬುದನ್ನು ಬಿಟ್ಟರೆ, ಉಳಿದಂತೆ ವ್ಯಕ್ತಿವಾದವನ್ನು ಅತಿಯಾಗಿ ಬಿಂಬಿಸುವ ತಂತ್ರದ ಬಿಗಿತದಲ್ಲಿರುವ ಅವರ ಕತೆಗಳು ಅಷ್ಟು ಆಪ್ತವೆನಿಸಿಲ್ಲ.

ನನಗೆ ಪ್ರಭಾಕರ್ ಕುರಿತು ಆಸಕ್ತಿ ಮೂಡಿಸಿದವರು ಮಾರ್ಕ್ಸ್‌ವಾದಿ ಚಿಂತಕ ಕೆ.ರಾಘವೇಂದ್ರರಾವ್ ಅವರು. ಅಮೆರಿಕೆಯ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುತ್ತಿದ್ದ ಎ.ಕೆ.ರಾಮಾನುಜನರ ಹೊಂದಾಣಿಕೆಯ ಗುಣವನ್ನು ಕಟುವಾಗಿ ವಿಮರ್ಶಿಸುತ್ತ, ಅಲ್ಲಿನ ಶೈಕ್ಷಣಿಕ ಕ್ಷೇತ್ರದಲ್ಲಿರುವ ಬಿಳಿಯರ ಯಜಮಾನಿಕೆಗೆ ಬಾಗದೆ ಹೊರಬಂದ ಪ್ರಭಾಕರ ಅವರ ದಿಟ್ಟ ಸ್ವಭಾವವನ್ನು ಅವರು ತಮ್ಮ ಸಂದರ್ಶನದಲ್ಲಿ ಪ್ರಸ್ತಾಪಿಸಿದ್ದರು. ಪ್ರಭಾಕರ ಅವರನ್ನು ಭೇಟಿಯಾಗಬೇಕು ಎಂದು ಅನಿಸುತ್ತಿತ್ತು. ಅದರಲ್ಲೂ ಭಾರತದ ಶಾಕ್ತಪೀಠಗಳಲ್ಲಿ ಮುಖ್ಯವಾಗಿರುವ ಅಸ್ಸಾಮಿನ ಕಾಮಾಖ್ಯಕ್ಕೆ ಹೋಗಲು ಯತ್ನಿಸುತ್ತಿದ್ದ ನಾನು, ಅಲ್ಲೇ ಸಮೀಪದ ಗೌಹಾತಿಯಲ್ಲಿರುವ ಅವರನ್ನು ಕಾಣಲು ಹವಣಿಕೆ ಮಾಡಿಕೊಂಡಿದ್ದೆ. ಆದರೆ ಸಾರ್ವಜನಿಕ ವ್ಯಕ್ತಿಯಾಗಲು ನಿರಾಕರಿಸಿ ಅಜ್ಞಾತವಾಗಿಯೇ ಬಾಳುವ ಅವರು ಸುಲಭವಾಗಿ ಸಿಗುತ್ತಿರಲಿಲ್ಲ.

ನನ್ನ ತವಕವನ್ನರಿತಿದ್ದ ಕೆ.ರಾಮಯ್ಯ, ‘ಪ್ರಭಾಕರ್ ಕರ್ನಾಟಕಕ್ಕೆ ಬಂದಿದ್ದಾರೆ. ಬನ್ನಿ’ ಎಂದು ಅವರ ಮನೆಗೆ ಕರೆದುಕೊಂಡು ಹೋದರು. ಮಧ್ಯಾಹ್ನದ ಸುಡುಹೊತ್ತು. ಪ್ರಭಾಕರ ಪ್ರೀತಿಯಿಂದ ಬರಮಾಡಿಕೊಂಡು ನೊರೆ ತುಂಬಿದ ಒಗರು ಬೀರಿನ ಮಗ್ಗನ್ನು ಕೈಗೆ ಕೊಟ್ಟು, ಕಾಮಾಖ್ಯದ ಬಗ್ಗೆಯೂ ತಂತ್ರ ಪಂಥದ ಬಗ್ಗೆಯೂ ಇರುವ ಕೃತಿಗಳನ್ನು ತೋರಿಸುತ್ತ, ಗಂಟೆಗಟ್ಟಳೆ ಮಾತಾಡಿದರು. ಅರಿವಿನ ಕಿಡಿಗಳು ಹಾರುವ ಅದೊಂದು ವಿದ್ವತ್‌ಪೂರ್ಣ ಹರಟೆ.

ನಾನು ಅವರಲ್ಲಿ ಶಿಷ್ಯವೃತ್ತಿ ಸ್ವೀಕರಿಸಿ ಹಲವಾರು ಸಲ ಕೋಲಾರಕ್ಕೆ ಹೋಗಿ ಬಂದಿದ್ದೇನೆ. ಅವರ ಮಾತುಕತೆಗಳಲ್ಲಿ ನನಗೆ ಮುಖ್ಯವಾಗಿ ಕಂಡಿದ್ದು, ಜಾತ್ಯತೀತವಾದ ಮನಸ್ಸು; ಸಣ್ಣಪುಟ್ಟ ಸಂಗತಿಗಳ ಮೇಲೂ ಕಾಳಜಿಯಿಂದ ಸೂಕ್ಷ್ಮವಾಗಿ ಚಿಂತಿಸುವ ಮಾನವೀಯತೆ; ಗತಕಾಲದ ಬಗ್ಗೆ ಹಳಹಳಿಕೆಯಿಲ್ಲದೆ ವರ್ತಮಾನದ ಸಮಸ್ಯೆಗಳನ್ನು ಕುರಿತು ಚಿಂತಿಸುವ ಪ್ರಖರವೂ ನಿಷ್ಠುರವೂ ಆದ ರಾಜಕೀಯ ಪ್ರಜ್ಞೆ. ಸಾರ್ವಜನಿಕ ಬದುಕಿನಲ್ಲಿ ಜಾತಿಪದ್ಧತಿ ಎಲ್ಲೆಮೀರಿ ನಿರತವಾಗಿರುವ ಕುರಿತ ಹೇವರಿಕೆ. ಹಿರಿಯ ಲೇಖಕರಲ್ಲಿ ಸಾಮಾನ್ಯವಾಗಿ ಎರಡು ಸ್ವಭಾವಗಳಿರುತ್ತವೆ. ಒಂದು- ಕಳೆದುಹೋದ ಕಾಲದ ಬಗ್ಗೆ ಭಾವುಕ ಮರುಕಳಿಕೆ. ಎರಡು-ವರ್ತಮಾನದ ಸಾಮಾಜಿಕ ರಾಜಕೀಯ ವೈರುಧ್ಯಗಳನ್ನು ಉದಾರವಾಗಿ ನೋಡುತ್ತ, ಚಿಂತನೆಯ ಮೊನಚನ್ನು ಕಳೆದುಕೊಳ್ಳುವುದು. ಆದರೆ ಆತ್ಮಕ್ಕೆ ಸದಾ ಬೆಂಕಿ ಹತ್ತಿಸಿಕೊಂಡಂತೆ ಉರಿಯುವ ಕೆಲವರಿದ್ದಾರೆ. ಕೋಚೆ, ಕುಸುಮಾಕರ ದೇವರಗೆಣ್ಣೂರ, ಎಂ.ಡಿ. ನಂಜುಂಡಸ್ವಾಮಿ, ನೀಲಗಂಗಯ್ಯ ಪೂಜಾರ, ಕೆ.ರಾಘವೇಂದ್ರರಾವ್, ಅಬ್ಬಿಗೇರಿ ವಿರೂಪಾಕ್ಷಪ್ಪ, ಸಾರಾ ಅಬೂಬಕರ್, ಕಾಮರೂಪಿ ಪ್ರಭಾಕರ-ಇವರೆಲ್ಲ ಇಂತಹವರು. ಈ ಹಿರಿಯರ ಜತೆ ಮಾತಾಡುವಾಗ ಇವರ ಹಠಮಾರಿತನ, ಜಗಳಗಂಟಿತನ, ಆದರ್ಶವಾದ, ನೈತಿಕ ಪ್ರಜ್ಞೆ ಹಾಗೂ ಭಿನ್ನಮತ ಇಷ್ಟವಾಗುತ್ತದೆ.

ಕರ್ನಾಟಕದಿಂದ ಬಹುಕಾಲ ದೂರವಿದ್ದ ಕಾರಣದಿಂದ ಏರ್ಪಟ್ಟಿರುವ ಅಪರಿಚಿತತೆಯಿಂದಲೊ ಅಥವಾ ಕರ್ನಾಟಕದ ಒಳಗೇ ಇದ್ದೂಇದ್ದೂ ನಮಗೆ ಕಾಣದಂತಾಗಿರುವ ವೈರುಧ್ಯಗಳು ‘ಹೊರಗಿನಿಂದ’ ಬಂದಿರುವ ಅವರಿಗೆ ಒಡೆದು ಕಾಣುತ್ತಿರುವುದರಿಂದಲೊ, ಪ್ರಭಾಕರ ಕರ್ನಾಟಕದ ಸಮಕಾಲೀನ ಸಾಂಸ್ಕೃತಿಕ ರಾಜಕಾರಣದ ವೈರುಧ್ಯಗಳ ಬಗ್ಗೆ ತೀಕ್ಷ್ಣವಾದ ಟಿಪ್ಪಣಿ ಮಾಡುತ್ತಿರುತ್ತಾರೆ; ಕನ್ನಡಿಗರ ಸ್ವಭಾವದಲ್ಲೇ ವ್ಯಕ್ತಿನಿಷ್ಠೆಗಾಗಿ ವಿಮರ್ಶೆಯ ನಿಷ್ಠುರತೆ ಬಿಟ್ಟುಕೊಡುವ, ಸಜ್ಜನಿಕೆಯ ಭಾಷೆಯಲ್ಲಿ ವಾಸ್ತವವನ್ನು ಅಡಗಿಸುವ ಪ್ರವೃತ್ತಿಯಿದೆ ಎಂದು ಹೇಳುತ್ತಿರುತ್ತಾರೆ. ಸಂಘಟಕರೊಬ್ಬರು ಕಾರ್ಯಕ್ರಮವೊಂದಕ್ಕೆ ಕರೆಸಿಕೊಂಡು ಪರಿಚಯ ಭಾಷಣದಲ್ಲಿ ತಮ್ಮನ್ನು ಅತಿಯಾಗಿ ಹೊಗಳಿದ್ದನ್ನು ನೆನೆಯುತ್ತ ಅವರೊಮ್ಮೆ ಹೇಳಿದರು: “ಏನ್ ಸ್ವಾಮಿ ಕನ್ನಡಿಗರು? ಎಷ್ಟು ಉದಾರತೆ! ನನ್ನ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ. ನಾನು ಎಲ್ಲ ಸೇರಿದರೆ ನೂರೈವತ್ತು ಪುಟಗಳನ್ನೂ ಬರೆದಿಲ್ಲ. ಕನ್ನಡಕ್ಕೆ ದೊಡ್ಡ ಕೊಡುಗೆಯನ್ನು ಕೊಟ್ಟಿಲ್ಲ. ಆದರೂ ವಾಚಾಮಗೋಚರ ಹೊಗಳಿಬಿಟ್ಟರು. ಕರ್ನಾಟಕದಲ್ಲಿ ಮಾತಿಗೆ ಬೆಲೆಯೇ ಇದ್ದಂತಿಲ್ಲ.’’

ಇದನ್ನು ಕೇಳುವಾಗ ಈಚೆಗೆ ಕಲ್ಕತ್ತಾದಲ್ಲಿ ನಾನು ಕಂಡ, ಹಿರಿಯ ಲೇಖಕ ರುದ್ರಪ್ರತಾಪ ಸೇನರ ಸನ್ಮಾನ ಕಾರ್ಯಕ್ರಮ ನೆನಪಾಯಿತು. ಸೇನರಿಗೆ 75ವರ್ಷ ತುಂಬಿದ ನೆಪದಲ್ಲಿ ಇರಿಸಿಕೊಂಡಿದ್ದ ಆ ಕಾರ್ಯಕ್ರಮ ಎಷ್ಟು ವಿಮರ್ಶಾತ್ಮಕವಾಗಿತ್ತು ಎಂದರೆ, ಅವರ ಶಿಷ್ಯರು ತಮ್ಮ ಗುರುವಿನ ಜತೆ ಕೋರ್ಟ್ಮಾರ್ಶಲ್ ನಡೆಸುವವರ ಹಾಗೆ ಪ್ರಶ್ನೆ ಕೇಳುತ್ತಿದ್ದರು. ಸೇನರು ಆ ಕಟುತರ ಪ್ರಶ್ನೆಗಳಿಗೆಲ್ಲ ಪ್ರಾಮಾಣಿಕವಾಗಿ ದ್ವಂದ್ವವಿಲ್ಲದೆ ಉತ್ತರಿಸುತ್ತಿದ್ದರು. ಹಿರಿಯರ ತಲೆಗೆ ಅಭಿನಂದನ ಗ್ರಂಥಗಳ ಸರಮಾಲೆಯನ್ನು ತಂದು ಕಟ್ಟಿ, ಎಗ್ಗಿಲದೆ ಹೊಗಳಿ ವೈಭವೀಕರಿಸುವ ಪದ್ಧತಿಯಿರುವ ಕರ್ನಾಟಕದಲ್ಲಿ, ಈ ಪರಿಯ ನಿಷ್ಠುರತೆ ಕಲ್ಪಿಸಿಕೊಳ್ಳುವುದೇ ಕಷ್ಟ.

ತೋರುಗಾಣಿಕೆಯನ್ನು ಸದಾ ನಿರಾಕರಿಸುವ ಪ್ರಭಾಕರ ಅವರಲ್ಲಿ, ಅವರ ಖಂಡಿತವಾದಿ ನಿಲುವಿಗೆ ಅಷ್ಟೊಂದು ತಾಳೆಯಾಗದ ಇನ್ನೊಂದು ಮುಖವಿದೆ. ಅದೆಂದರೆ, ಜೀವನಪ್ರೀತಿಯ ಸಂಕೇತದಂತಿರುವ ತಮಾಶೆ ಮತ್ತು ಪೋಲಿತನ. ಈ ತಮಾಶೆಯ ಗುಣ ಅದ್ಭುತ ನಾಟಕೀಯ ಶೈಲಿಯಾಗಿ ಅವರ ಕಥೆ ಕಾದಂಬರಿಗಳಲ್ಲೆಲ್ಲ ಆವರಿಸಿಕೊಂಡಿದೆ. ತಮಗೆ ಪಾಠ ಹೇಳಿದ ಗುರುಗಳ ವೈಯಕ್ತಿಕ ಬದುಕಿನಲ್ಲಿದ್ದ ಸನಾತನವಾದ ಮತ್ತು ತರಗತಿಗಳಲ್ಲಿ ಕನ್ನಡ ಬಳಸದ ಅವರ ಇಂಗ್ಲಿಷಿನ ವ್ಯಾಮೋಹ ಕುರಿತಂತೆ, ಅವರಲ್ಲಿ ಸ್ವಾರಸ್ಯಕರ ಮಾಹಿತಿಗಳಿವೆ. ಪ್ರಭಾಕರ ಅವರು ಆಪ್ತರ ಎದುರು ತಾವು ಬರೆದಿರುವ ಅಪ್ರಕಟಿತ ಪೋಲಿ ಪದ್ಯಗಳನ್ನು ವಾಚಿಸುವುದುಂಟು. ಬಹುಶಃ ಇದು ಅವರ ಗೆಳೆಯರಾಗಿದ್ದ ಎಚ್.ಎಸ್. ಬಿಳಿಗಿರಿಯವರ ಸಹವಾಸ ಫಲವಿರಬೇಕು.

ಒಂದೇ ವ್ಯಕ್ತಿತ್ವದಲ್ಲಿ ಒಟ್ಟಿಗೇ ಇರಲು ಕಷ್ಟವೆನಿಸಬಹುದಾದ ಇನ್ನೂ ಅನೇಕ ಸಂಗತಿಗಳು ಅವರಲ್ಲಿ ಸಹಜವಾಗಿ ನಿರಾಳವಾಗಿ ಇವೆ. ಉದಾ.ಗೆ, ಬಹುಭಾಷಿಕರಾದ ಅವರ ಮನೆಮಾತು ತಮಿಳುಗನ್ನಡ; ಬರವಣಿಗೆ ಕನ್ನಡ ಮತ್ತು ಇಂಗ್ಲೀಶಿನಲ್ಲಿ; ಸಂಸ್ಕೃತ ಅಸ್ಸಾಮಿ ಬಂಗಾಳಿ ಭಾಷೆಗಳಲ್ಲಿ ದೊಡ್ಡ ವಿದ್ವತ್ತು. (ಅವರ ಅಸ್ಸಾಮಿ ಬಂಗಾಳಿ ತಿಳಿವಳಿಕೆಯಿಂದ ಕನ್ನಡಕ್ಕೆ ಪ್ರಯೋಜನವಿನ್ನೂ ಆಗಿಲ್ಲ). ಪಂಪ ಅವರ ಇಷ್ಟದ ಕವಿ. ಮೂಲತಃ ಇಂಗ್ಲೀಶ್ ಸಾಹಿತ್ಯದ ವಿದ್ಯಾರ್ಥಿಯಾದರೂ ಸಾಹಿತ್ಯಕ್ಕಿಂತ ಹೆಚ್ಚಾಗಿ ಅಂತರಾಷ್ಟ್ರೀಯ ರಾಷ್ಟ್ರೀಯ ರಾಜಕಾರಣದ ಮೇಲೆ ಹೆಚ್ಚು ಬರೆವಣಿಗೆ. ಅದರಲ್ಲೂ ಈಶಾನ್ಯ ಭಾರತದ ರಾಜಕಾರಣ ಭಾಷೆ ಧರ್ಮ ಸಂಸ್ಕೃತಿ ಕುರಿತ ಅವರ ತಿಳಿವಳಿಕೆ ಅಪರೂಪದ್ದು. ಇವನ್ನೆಲ್ಲ ಒಟ್ಟಿಗೆ ಹೇಗೆ ಕಲ್ಪಿಸಿಕೊಳ್ಳುವುದು? ಪ್ರಭಾಕರ ತಮ್ಮ ಕಾದಂಬರಿಯ ಒಂದು ಪಾತ್ರದ ಹಾಗೇ ಬದುಕಿದ್ದಾರೆ.

ಅವರು ಈಚೆಗೆ ಮಾತಾಡುತ್ತ ಕೊಂಚ ದಣಿದ ದನಿಯಲ್ಲಿ “ಸ್ವಾಮಿ, ಕರ್ನಾಟಕ ನನಗೆ ಸಾಕಾಗಿದೆ. ಗೌಹಾಟಿಗೆ ಹೋಗಬೇಕು ಅನಿಸುತ್ತಿದೆ’ ಎಂದು ಗೊಣಗಿದರು. “ಹೋಗಿ. ಆದರೆ ಮತ್ತೆಬನ್ನಿ’’ ಎಂದೆ. ಅವರಲ್ಲಿ ಕೋಲಾರ-ಗೌಹಾತಿಗಳ ನಡುವೆ ವಿಚಿತ್ರವಾದ ಆಕರ್ಷಣೆ ವಿಕರ್ಷಣೆಯಿದೆ. ಇದು ಬಹುಕಾಲ ಬೇರೆಡೆ ಬೆಳೆದ ಮರ ತನ್ನ ಮೂಲನೆಲಕ್ಕೆ ಬಂದು ನಾಟಿಗೊಂಡರೆ ಬೇರೂರುವ ಕಷ್ಟ. ಮರಳಿ ಹುಟ್ಟಿದೂರಿಗೆ ಬರುವಿಕೆ ಬಾಲ್ಯದ ನೆನಪುಗಳನ್ನು ಎಚ್ಚರಿಸಿ ಸುಖ ಕೊಡುತ್ತದೆ; ಆದರೆ ಹೊಚ್ಚ ಹೊಸತೆೆನಿಸುವಷ್ಟು ಬದಲಾಗಿರುವ ಪರಿಸರವು, ಕಾಡುವ ಏಕಾಂಗಿತನವನ್ನೂ ತಂದಿಡುತ್ತದೆ. ಯಾರ ಮರುಕವನ್ನೂ ಬಯಸದೆ ಏಕಾಂತದಲ್ಲಿ ಘನತೆಯಿಂದ ಕೊನೆಯ ದಿನಗಳನ್ನು ಕಳೆಯ ಬಯಸುವ ಇಂತಹ ಹಠಮಾರಿ ಜೀವಗಳು, ಒಳಗೇ ಮೃದ್ವಂಗಿಗಳಾಗಿ ಆಪ್ತಸಂಗಾತಕ್ಕೆ ಹಾತೊರೆಯುತ್ತಿರುತ್ತವೆ.

ಆ ಸಂಗಾತದ ಸ್ವರೂಪ ಎಂತಹುದು ಎಂದು ಸ್ಪಷ್ಟವಾಗುವುದಿಲ್ಲ. ನಾನು ‘ಕಾಮರೂಪಕ್ಕೆ ಯಾವಾಗ ಹೋಗುತ್ತೀರಿ’ ಎಂದು ಕೇಳಿದೆ: ‘ಆದಿಮದ 50ನೇ ಬೆಳುದಿಂಗಳ ಕಾರ್ಯಕ್ರಮ ಮುಗಿಸಿಕೊಂಡು’ ಎಂದರು.
ಪ್ರತಿಯೊಬ್ಬರಿಗೂ ಬಾಳಿನಲ್ಲಿ ಬಹುರೂಪಧಾರಣೆ ಮಾಡಬೇಕಾದ ಒತ್ತಡಗಳು ಎದುರಾಗಬಹುದು. ಆದರೆ ಈ ರೂಪಧಾರಣೆಗೆ ಕಾರಣ, ನಮ್ಮ ಇಚ್ಛಾನಿಚ್ಛೆಗಳು ಮಾತ್ರವಲ್ಲ, ಬಾಳಿನ ಅನೂಹ್ಯ ಒತ್ತಡಗಳು ಸಹ. ಈ ಒತ್ತಡಗಳು ಬರೆಹ ಇಲ್ಲವೇ ಮಾತಿನ ವ್ಯಾಖ್ಯಾನಕ್ಕೆ ಕೆಲವೊಮ್ಮೆ ನಿಲುಕುವಂತೆ ಇರುವುದಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending