Connect with us

ಬಹಿರಂಗ

ಗುರಿ ಮುಟ್ಟಲು ಮೋದಿ ಬಹಳ ದೂರ ಕ್ರಮಿಸಬೇಕಿದೆ..!

Published

on

  • ಮೂಲ : ಸುಬ್ರಮಣ್ಯನ್‌ ಸ್ವಾಮಿ, ಅನುವಾದ : ನಾ ದಿವಾಕರ

ಭಾರತದ ಅರ್ಥವ್ಯವಸ್ಥೆಗೆ ಹೊಸ ಅರ್ಥಿಕ ನೀತಿ ಬೇಕಿದೆ ಅಸಂಬದ್ಧ ಘೋಷಣೆಗಳಲ್ಲ


ಮೇ 31 2022ರಂದು ರಾಷ್ಟ್ರೀಯ ಆದಾಯದ ತಾತ್ಕಾಲಿಕ ಅಂದಾಜು ಪ್ರಕಟಿಸಿದ ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) 2021-22ರ ಆರ್ಥಿಕ ವರದಿಯನ್ನು ಬಿಡುಗಡೆ ಮಾಡಿದೆ. 2020-21ರ ಹಣಕಾಸು ವರ್ಷಕ್ಕೆ ಹೋಲಿಸಿದರೆ, ವಾರ್ಷಿಕ ಸಮಾನಾರ್ಥಕವಾಗಿ ಏಪ್ರಿಲ್‌ 1-ಮಾರ್ಚ್‌ 31 2022 ರ ಹಣಕಾಸು ವರ್ಷದಲ್ಲಿ ನಾಲ್ಕನೆ ತ್ರೈಮಾಸಿಕದ ಜಿಡಿಪಿ ಬೆಳವಣಿಗೆಯ ದರ ಶೇ 4.1ರಷ್ಟಿರುತ್ತದೆ ಎಂದು ಹೇಳಿದೆ.

2020-21ರ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌ 1 ರಿಂದ ಜೂನ್‌ 30) ಎನ್‌ಎಸ್‌ಒ ಮಾಹಿತಿಯ ಅನುಸಾರ ಜಿಡಿಪಿ ಬೆಳವಣಿಗೆಯ ದರ ಶೇ -23.8 ರಷ್ಟಿತ್ತು. ಇದು ಕೋವಿದ್‌ ಸಾಂಕ್ರಾಮಿಕ ವ್ಯಾಪಕವಾಗಿ ಹರಡುತ್ತಿದ್ದ ಅವಧಿಯಾಗಿತ್ತು. ಇದರ ನಂತರದ ಮೂರು ತ್ರೈಮಾಸಿಕ ಅವಧಿಯಲ್ಲಿ ಒಟ್ಟು ಬೆಳವಣಿಗೆಯ ದರ ನಕಾರಾತ್ಮವಾಗಿಯೇ ಮುಂದುವರೆದಿತ್ತು. ಹಾಗಾಗಿಯೇ 2020-21ರ ಹಣಕಾಸು ವರ್ಷದಲ್ಲಿ ನಾಲ್ಕು ತ್ರೈಮಾಸಿಕಗಳ ವಾರ್ಷಿಕ ಜಿಡಿಪಿ ಬೆಳವಣಿಗೆ ಶೇ -4.8ರಷ್ಟಿತ್ತು.

ಇಲ್ಲಿ ನರೇಂದ್ರ ಮೋದಿ ಸರ್ಕಾರ ಅವಶ್ಯವಾಗಿ ಗಮನಿಸಲೇಬೇಕಾದ ಎರಡು ವಾಸ್ತವ ಸಂಗತಿಗಳಿವೆ. ಮೊದಲನೆಯದಾಗಿ, ಭಾರತದ ಆರ್ಥಿಕತೆಯು 2016ರಿಂದಲೂ ಸತತವಾಗಿ ಕುಸಿಯುತ್ತಲೇ ಇದೆ. ಅರ್ಥಶಾಸ್ತ್ರಜ್ಞರು 1950-77ರ ಅವಧಿಯ ಕಾಂಗ್ರೆಸ್‌ ಆಡಳಿತಾವಧಿಯ ಜಿಡಿಪಿ ಬೆಳವಣಿಗೆಯನ್ನು “ ಹಿಂದೂ ಬೆಳವಣಿಗೆಯ ದರ ” ಎಂದು ಗುರುತಿಸಿದ್ದಾರೆ.

ಇದು ಶೇ 3.5 ರಿಂದ ಶೇ 4ರವರೆಗೆ ಜಿಡಿಪಿ ಬೆಳವಣಿಗೆಯನ್ನು ಸೂಚಿಸುತ್ತದೆ. 2016ರ ನಂತರದ ಬೆಳವಣಿಗೆ ಇದಕ್ಕಿಂತಲೂ ಕಡಿಮೆ ಇರುವುದನ್ನು ಗಮನಿಸಬೇಕಿದೆ. ಎರಡನೆಯದಾಗಿ, 2014ರಿಂದ ಬಿಜೆಪಿ ಆಡಳಿತಾವಧಿಯಲ್ಲಿ ನರೇಂದ್ರ ಮೋದಿ ಅನುಸರಿಸಿದ ʼ ವಿಕಾಸ ʼದ ಮಾರ್ಗ ಬಹುಪಾಲು ಜವಹರಲಾಲ್‌ ನೆಹರೂ ಅವರʼ ಹಿಂದೂ ಬೆಳವಣಿಗೆಯ ದರ ʼದ ಯೋಜನೆಯನ್ನೇ ಹೋಲುತ್ತದೆ.

ಪಿ ವಿ ನರಸಿಂಹರಾವ್‌ ಅವರ ಅವಧಿಯಲ್ಲಿ ಜಾರಿಗೊಳಿಸಿದ ರಾಚನಿಕ ಸುಧಾರಣೆಗಳನ್ನು ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಿದಂತೆ ಕಾಣುವುದಿಲ್ಲ. 2016ರಿಂದ ಈವರೆಗೆ ಜಿಡಿಪಿ ಬೆಳವಣಿಗೆಯ ದರದಲ್ಲಿ ಕುಸಿತವನು ಗಮನಿಸಿದರೆ, ವಿಕಾಸದ ಮಾರ್ಗ ಅನುಸರಿಸುತ್ತಿರುವ ಸರ್ಕಾರದ ಮಟ್ಟಿಗೆ ನಾಚಿಕೆಗೇಡಿನ ಸಂಗತಿ ಎನಿಸುತ್ತದೆ.

2016ರಿಂದ ಜಿಡಿಪಿ ಬೆಳವಣಿಗೆಯ ದರ ನಿರಂತರವಾಗಿ ಕುಸಿಯುತ್ತಿರುವುದೇ ಅಲ್ಲದೆ, ಪ್ರಮುಖ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸದೆ ಸಾಧಿಸಲು ಅಸಾಧ್ಯವಾದ ನಿರೀಕ್ಷೆಗಳನ್ನು ಅಬ್ಬರದಿಂದ ಪ್ರಚಾರ ಮಾಡಲಾಗಿದೆ. ಉದಾಹರಣೆಗೆ 2024-25ರ ವೇಳೆಗೆ ಭಾರತ ಐದು ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯಾಗುತ್ತದೆ ಎಂದು 2019ರಲ್ಲೇ ಘೋಷಿಸಲಾಗಿದೆ.

ಮಾಧ್ಯಮಗಳಲ್ಲಿ ಅಬ್ಬರದ ಪ್ರಚಾರ ಪಡೆದ ಈ ನಿರೀಕ್ಷಿತ ಬೆಳವಣಿಗೆಯನ್ನು ಸಾಕಾರಗೊಳಿಸಬೇಕಾದರೆ ಭಾರತದ ಆರ್ಥಿಕತೆ ವಾರ್ಷಿಕ ಶೇ 14.8ರಷ್ಟು ಜಿಡಿಪಿ ಬೆಳವಣಿಗೆಯನ್ನು ಸಾಧಿಸಬೇಕಾಗುತ್ತದೆ. ಈ ಸಂದರ್ಭದಲ್ಲಿ ನರೇಂದ್ರ ಮೋದಿಯವರ ನಿರೀಕ್ಷಿತ ʼ ಮೋದಿನಾಮಿಕ್ಸ್‌ ʼ ಬಗ್ಗೆ ಸಾರ್ವಜನಿಕ ಚರ್ಚೆಗೆ ಯಾವುದೇ ಸರ್ಕಾರಿ ಅಧಿಕಾರಿ ಮುಂದಾದರೂ ನಾನು ತಯಾರಿದ್ದೇನೆ. ಒಟ್ಟಾರೆ ಹೇಳುವುದಾದರೆ 2014 ರಿಂದ ಇಲ್ಲಿಯವರೆಗೆ ತಮ್ಮ ಆಡಳಿತಾವಧಿಯಲ್ಲಿ ಪ್ರಧಾನಿ ಮೋದಿ ಯಾವುದೇ ಘೋಷಿತ ಬೃಹದಾರ್ಥಿಕ ಗುರಿಯನ್ನು ತಲುಪುವ ಪ್ರಯತ್ನಗಳನ್ನು ಮಾಡಿಲ್ಲ.

ಏನು ಮಾಡಬೇಕು..?

ಭಾರತದ ಆರ್ಥಿಕತೆಗೆ ಇಂದು ಅಗತ್ಯವಾಗಿರುವುದು ನಿರ್ದಿಷ್ಟ ವಸ್ತುನಿಷ್ಠ ಗುರಿ ಹೊಂದಿರುವ, ಸ್ಪಷ್ಟ ಆದ್ಯತೆಗಳನ್ನು ಹೊಂದಿರುವ ಮತ್ತು ಗುರಿ ಸಾಧಿಸಲು ಸ್ಪಷ್ಟ ರಣತಂತ್ರವನ್ನು ಹೊಂದಿರುವಂತಹ ಒಂದು ಹೊಸ ಆರ್ಥಿಕ ನೀತಿ. ಇದಕ್ಕೆ ಪೂರಕವಾಗಿ ಜಾಣ್ಮೆಯ, ಪಾರದರ್ಶಕವಾದ ಸಂಪನ್ಮೂಲ ಕ್ರೋಢೀಕರಣದ ಯೋಜನೆಯೂ ಅತ್ಯವಶ್ಯ.

2004ರಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಸರ್ಕಾರವು ತಮ್ಮ ಭ್ರಮಾತ್ಮಕ “ಭಾರತ ಪ್ರಕಾಶಿಸುತ್ತಿದೆ” ಎಂಬ ಘೋಷಣೆಯನ್ನೇ ಮುಂದಿಟ್ಟುಕೊಂಡು, ಆರು ತಿಂಗಳು ಮುಂಚಿತವಾಗಿಯೇ ಲೋಕಸಭಾ ಚುನಾವಣೆಗಳನ್ನೆದುರಿಸಿ ದಯನೀಯವಾಗಿ ಸೋಲು ಅನುಭವಿಸಿತ್ತು. ಇದರ ನಂತರ ಹತ್ತು ವರ್ಷಗಳ ಕಾಲ ಬಿಜೆಪಿ ಅಧಿಕಾರಕ್ಕೆ ಬರಲಾಗಲಿಲ್ಲ. 2014ರಲ್ಲಿ ೨ಜಿ ತರಂಗಾಂತದ ಹಗರಣದಲ್ಲಿ ಸುಪ್ರೀಂಕೋರ್ಟ್‌ ನೀಡಿದ ತೀರ್ಪು, ಮಂಜೂರಾದ ಪರವಾನಗಿಯ ರದ್ದತಿ, ರಾಮಮಂದಿರ ನಿರ್ಮಾಣದ ಭರವಸೆ ಮತ್ತು ಕುಸಿಯುತ್ತಿದ್ದ ಆರ್ಥಿಕತೆಯ ಪರಿಣಾಮವಾಗಿ ಬಿಜೆಪಿ ಮರಳಿ ಅಧಿಕಾರದ ಗದ್ದುಗೆ ಏರಿತ್ತು.

ಇಂದು ಬಿಜೆಪಿ ಎಂಟು ವರ್ಷಗಳ ಆಡಳಿತವನ್ನು ಪೂರೈಸಿದೆ. ಕೊಂಚ ಮಟ್ಟಿಗೆ ಸಾಮಾಜಿಕ-ಧಾರ್ಮಿಕ ನೆಲೆಯಲ್ಲಿನ ಸಾಫಲ್ಯ ಬಿಜೆಪಿಯ ಕಾರ್ಯಕರ್ತರ ಉತ್ಸಾಹವನ್ನು ಉದ್ದೀಪನಗೊಳಿಸಿದ್ದರೂ, 2024ರ ಚುನಾವಣೆಯ ಫಲಿತಾಂಶವನ್ನು ಖಚಿತವಾಗಿ ನಿರೀಕ್ಷಿಸಲಾಗುವುದಿಲ್ಲ. ಪಂಜಾಬ್‌ ಮತ್ತು ಪಶ್ಚಿಮ ಬಂಗಾಲದ ಚುನಾವಣಾ ಫಲಿತಾಂಶಗಳೂ ಸಹ ಶುಭಸೂಚನೆಯನ್ನೇನೂ ನೀಡಿಲ್ಲ.

ಇತ್ತೀಚೆಗೆ ನಡೆದ ಉತ್ತರಪ್ರದೇಶ ಚುನಾವಣೆಗಳಲ್ಲಿ ಬಹುತೇಕ ಸ್ಥಾನಗಳಲ್ಲಿ ಬಿಜೆಪಿಯ ಗೆಲುವಿನ ಅಂತರ ಕಡಿಮೆಯಾಗಿದೆ. ನನ್ನ ಅಭಿಪ್ರಾಯದಲ್ಲಿ, ಈಗ ಕಂಡುಬರುತ್ತಿರುವ ಆರ್ಥಿಕ ವೈಫಲ್ಯಗಳೂ 2024ರ ಚುನಾವಣೆಯ ಬಗ್ಗೆ ಇರುವ ನಿರೀಕ್ಷೆಗಳನ್ನು ಹುಸಿಗೊಳಿಸಲು ನೆರವಾಗಬಹುದು. ಹತಾಶ ರಾಜಕೀಯ ತೀವ್ರಗಾಮಿಗಳಿಂದ ಪ್ರಜಾತಂತ್ರ ವ್ಯವಸ್ಥೆಯೇ ಅಪಾಯ ಎದುರಿಸಬಹುದು.

ಪ್ರತಿಯೊಂದು ದೇಶದಲ್ಲೂ ಪ್ರಜಾಪ್ರಭುತ್ವ ವ್ಯವಸ್ಥೆಯು ನಾಲ್ಕು ಸ್ತಂಭಗಳನ್ನು ಆಶ್ರಯಿಸುತ್ತದೆ. ಚುನಾಯಕ ರಾಜಕಾರಣದ ಔಚಿತ್ಯ, ಸಾಂವಿಧಾನಿಕ ರಕ್ಷಣಾ ಕ್ರಮಗಳು, ಕಾರ್ಯತಃ ಸ್ವತಂತ್ರವಾಗಿರುವ ಸಂಸ್ಥೆಗಳು ಮತ್ತು ವಿಶ್ವಾಸಾರ್ಹ ಉತ್ತರದಾಯಿತ್ವ. ಕೇವಲ ಚುನಾವಣೆಗಳು ಮಾತ್ರವೇ ಪ್ರಜಾಪ್ರಭುತ್ವದ ಉಳಿವಿಗೆ ಸಾಕಾಗುವುದಿಲ್ಲ. ಇಲ್ಲಿ ಮಾರುಕಟ್ಟೆ ಮತ್ತು ಪ್ರಜಾತಂತ್ರದ ನಡುವೆ ಇರುವ ಸಂಘರ್ಷವನ್ನು ನಿವಾರಿಸಬೇಕಾಗುತ್ತದೆ.

ಭ್ರಷ್ಟತೆಗೆ ಒಳಗಾಗದ ಬಹುಸಂಖ್ಯಾತ ಬಡ ಜನತೆಯ ಸಬಲೀಕರಣದ ಮೂಲಕ ಚಾಲ್ತಿಯಲ್ಲಿರಬಹುದಾದ ಒಂದು ಅತ್ಯುತ್ಸಾಹಿ ಪ್ರಜಾತಂತ್ರ ವ್ಯವಸ್ಥೆಯಲ್ಲಿ, ಅಲ್ಪಸಂಖ್ಯೆಯಲ್ಲಿರುವ ಶ್ರೀಮಂತ ಬಂಡವಾಳಶಾಹಿಗಳ ಮತ್ತು ಉದ್ಯಮಿಗಳ ಹಿತಾಸಕ್ತಿಗೆ ವ್ಯತಿರಿಕ್ತವಾದ ಶಾಸನಗಳನ್ನು ಜಾರಿಗಳಿಸುವ ಒತ್ತಡಗಳು ಸಹಜವಾಗಿಯೇ ಹೆಚ್ಚಾಗಿರುತ್ತದೆ.

ಮತ್ತೊಂದೆಡೆ ಸಬಲೀಕರಣಗೊಂಡ ಅಲ್ಪಸಂಖ್ಯೆಯ ಶ್ರೀಮಂತ ವರ್ಗಗಳಿಗೆ ಬಂಡವಾಳವನ್ನು ಸುಲಭವಾಗಿ ಎಟುಕುವಂತೆ ಮಾಡುವ ಮಾರುಕಟ್ಟೆ ಆರ್ಥಿಕತೆಯಲ್ಲಿ ಮಾಧ್ಯಮ, ಕೌಶಲ್ಯ ಮತ್ತು ಇತರ ಜಾಲಗಳ ಮೇಲೆ ಸುಲಭವಾಗಿ ನಿಯಂತ್ರಣ ಸಾಧಿಸುವ ಬಂಡವಳಿಗ ವರ್ಗವು ಚುನಾವಣಾ ವ್ಯವಸ್ಥೆಗೆ ಹಣಕಾಸು ನೆರವು ಒದಗಿಸುತ್ತಲೇ ಅದನ್ನು ನಗಣ್ಯಗೊಳಿಸುವ ಸಾಧ್ಯತೆಗಳೂ ಇರುತ್ತವೆ.

ಆದುದರಿಂದ ಪ್ರಜಾತಂತ್ರ ವ್ಯವಸ್ಥೆಯ ನಿಯಮಗಳನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗುತ್ತದೆ. ನರಸಿಂಹರಾವ್‌ ಅವರಂತಹ ಆರ್ಥಿಕ ಸುಧಾರಣೆಯ ಹರಿಕಾರರೂ ಭಾರತದಲ್ಲಿ ಚುನಾವಣಾ ವೈಫಲ್ಯ ಎದುರಿಸಿರುವುದನ್ನು ಗಮನಿಸಬೇಕಿದೆ.

ಹಾಗಾಗಿ ಸುಧಾರಣೆಗಳ ಮಾದರಿ ಮುಖ್ಯವಾಗುತ್ತದೆ. ಈ ಸುಧಾರಣೆಗಳನ್ನು ಜಾರಿಗೊಳಿಸುವವರು ಚುನಾವಣೆಗಳಲ್ಲಿ ಗೆಲ್ಲಬೇಕಾಗುತ್ತದೆ. ಇಲ್ಲಿ ಕೆಲವು ಉದಾಹರಣೆಗಳನ್ನು ಗಮನಿಸುವುದಾದರೆ, ಪ್ರಜಾತಂತ್ರ ವ್ಯವಸ್ಥೆಯನ್ನು ಹೊಂದಿರುವ ಜಪಾನ್‌ ಯಾವುದೇ ರೀತಿಯ ವಿವೇಕಯುತ ನಿಯಮಗಳಿಲ್ಲದ ಉತ್ತರದಾಯಿತ್ವ ಇಲ್ಲದ ಅಪಾರದರ್ಶಕ ಹಣಕಾಸು ವ್ಯವಸ್ಥೆಯನ್ನು ಸ್ಥಾಪಿಸಲು ಹೇಗೆ ಬಂಡವಾಳ ಸ್ನೇಹಿ ವಾತಾವರಣವನ್ನು ಸೃಷ್ಟಿಸಬೇಕಾಯಿತು ಎಂದು ಗಮನಿಸಬೇಕು. ಹಾಗೆಯೇ ನೂತನ ಹಣಕಾಸು ಉತ್ಪನ್ನಗಳನ್ನು ನಿಯಂತ್ರಿಸುವ ಯಾವುದೇ ಸ್ಪಷ್ಟ ಶಾಸನಗಳನ್ನು ಹೊಂದಿರದಿದ್ದರೂ ಅಮೆರಿಕ ಮಾರುಕಟ್ಟೆ ದುರಾಸೆಯ ಹಾದಿಗಳಿಗೆ ಮುಕ್ತ ಅವಕಾಶ ನೀಡಿದ್ದರಿಂದ 2007-09ರ ಹಣಕಾಸು ಬಿಕ್ಕಟ್ಟನ್ನು ಎದುರಿಸಿತ್ತು ಎನ್ನುವುದನ್ನೂ ಗಮನಿಸಬೇಕು.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಆರ್ಥಿಕ ಸುಧಾರಣೆಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ, ದಲ್ಲಾಳಿಗಳು ಚುನಾವಣೆಗಳ ಮೇಲೆ ಪಾರಮ್ಯ ಸಾಧಿಸದಿರುವಂತೆ ಎಚ್ಚರ ವಹಿಸಬೇಕಾಗುತ್ತದೆ. (ಸಾಮಾನ್ಯವಾಗಿ ಶ್ರೀಮಂತ ಬಂಡವಳಿಗರಿಗೆ ಪರವಾನಗಿ, ಮಂಜೂರಾತಿಯನ್ನು ಒದಗಿಸಲು ದಲ್ಲಾಳಿಗಳಂತೆ ಕಾರ್ಯನಿರ್ವಹಿಸುವವರು ಆರ್ಥಿಕ ನಿಬಂಧನೆಗಳಿಲ್ಲದ ಸುಧಾರಣಾ ನೀತಿಯಿಂದ ತಮ್ಮ ಆದಾಯವನ್ನು ಕಳೆದುಕೊಳ್ಳುತ್ತಾರೆ.) ಹಾಗೆಯೇ ಸುಧಾರಣಾ ಕ್ರಮಗಳಿಂದ ತಕ್ಷಣಕ್ಕೆ ಯಾವುದೇ ಉಪಯೋಗ ಪಡೆಯದ ಅಸಂಘಟಿತ ವಲಯದ ಬಡ ಜನರನ್ನು ಸಂತೃಪ್ತಿಪಡಿಸಲು ಹಣದುಬ್ಬರ ನಿಯಂತ್ರಿಸಿ ನಿರುದ್ಯೋಗ ಪ್ರಮಾಣವನ್ನು ಕಡಿಮೆ ಮಾಡಬೇಕಾಗುತ್ತದೆ. ಆರ್ಥಿಕ ನಿಬಂಧನೆಗಳನ್ನು ತೆರವುಗೊಳಿಸುವುದೆಂದರೆ ಸರ್ಕಾರಗಳು ಸಕಾರಾತ್ಮಕ ಕ್ರಮಗಳಿಂದ ಹಿಂದೆಗೆಯಬೇಕಿಲ್ಲ. ಜನತೆಯ ಸುರಕ್ಷತಾ ಜಾಲಗಳನ್ನು ದುರ್ಬಲಗೊಳಿಸಬೇಕಿಲ್ಲ. ಸಮಾನ ಅವಕಾಶಗಳನ್ನು ಕಲ್ಪಿಸುವುದಕ್ಕೆ ಹಿಂಜರಿಯಬೇಕಿಲ್ಲ. ಮಾರುಕಟ್ಟೆ ವೈಫಲ್ಯಗಳನ್ನು ಸಹಿಸಿಕೊಳ್ಳಬೇಕೆಂದೂ ಇಲ್ಲ
.
ನಿಬಂಧನೆಗಳನ್ನು ಸಡಿಲಗೊಳಿಸುವ ಪ್ರಕ್ರಿಯೆಯು ತೀವ್ರಗೊಂಡಂತೆಲ್ಲಾ ಉಲ್ಬಣಿಸಬಹುದಾದ ಸಾಮಾಜಿಕ ಕ್ಷೋಭೆಯನ್ನು ನಿಭಾಯಿಸಲು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಸಜ್ಜುಗೊಳಿಸಿ ಬಲಪಡಿಸಬೇಕಾಗುತ್ತದೆ. 1991ರ ನಂತರದಲ್ಲಿ ರಷ್ಯಾ ಇಂತಹ ಪರಿಸ್ಥಿತಿಯನ್ನು ಎದುರಿಸಿದೆ. ರಷ್ಯಾದಲ್ಲಿ ಸಾಮಾಜಿಕ ಕ್ಷೋಭೆ ಮತ್ತು ದುರವಸ್ಥೆ ಪರಾಕಾಷ್ಠೆ ತಲುಪಿದ್ದರಿಂದಲೆ ಸರ್ವಾಧಿಕಾರ ಮರಳಿ ಬಂದಿದೆ. ಆದುದರಿಂದ ಸಾರ್ವಜನಿಕ ಸುವ್ಯವಸ್ಥೆ ಮತ್ತು ಅನಿಯಂತ್ರಿತ ಆರ್ಥಿಕತೆಯ ನಡುವೆ ಏರ್ಪಡುವ ಸಂಘರ್ಷವನ್ನು ಸಕಾರಾತ್ಮಕ ಕ್ರಮಗಳ ಮೂಲಕ ಸರಿಪಡಿಸಬೇಕಾಗುತ್ತದೆ.

ವ್ಯವಸ್ಥೆಯಲ್ಲಿ ಬಡಜನತೆಗೆ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸುರಕ್ಷತಾ ಜಾಲಗಳನ್ನು ಮತ್ತು ಸಾಮಾಜಿಕ ಭದ್ರತೆಯನ್ನು ಕಲ್ಪಿಸಬೇಕಾಗುತ್ತದೆ. ಸಮಾನ ಅವಕಾಶದ ನೆಲೆಗಳನ್ನು ಕಲ್ಪಿಸುವ ಮೂಲಕ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವ ಮೂಲಕ, ಧರ್ಮದರ್ಶಿತ್ವವನ್ನು ಉತ್ತೇಜಿಸುವ ಮೂಲಕ, ಮಾರುಕಟ್ಟೆ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಪೋರೇಟ್‌ ಆಡಳಿತವನ್ನು ನ್ಯಾಯಸಮ್ಮತಗೊಳಿಸಬೇಕಾಗುತ್ತದೆ.

ಮಾರುಕಟ್ಟೆ ವ್ಯವಸ್ಥೆ ಎಂದರೆ ಸರ್ವ ಸ್ವತಂತ್ರ ಮುಕ್ತ ಅವಕಾಶದ ನೆಲೆ ಅಲ್ಲ. ವ್ಯಾಪಾರ ವಹಿವಾಟುಗಳನ್ನು ಇಲ್ಲಿ ಬಂಡವಾಳಶಾಹಿಯೇ ನಿಯಂತ್ರಿಸುತ್ತದೆ. ಈ ನಿಯಮದೊಂದಿಗೆ, ಬಂಡವಾಳಶಾಹಿಯ ಮಾರುಕಟ್ಟೆ ವ್ಯವಸ್ಥೆ ಕಾರ್ಯನಿರ್ವಹಿಸುತ್ತದೆ. ಇಲ್ಲಿ ಮುಖ್ಯ ಚಾಲಕ ಶಕ್ತಿ ಬಂಡವಾಳವೇ ಆಗಿರುವುದರಿಂದ ಬಂಡವಾಳ ಹೂಡಿಕೆಯ ಮೂಲಕ ಉತ್ಪಾದಕೀಯತೆಯನ್ನು ಹೆಚ್ಚಿಸುವುದು ಮುಖ್ಯವಾಗುತ್ತದೆ.

(ಮೂಲ : Modinomics and the long distance to finish ಸುಬ್ರಮಣ್ಯನ್‌ ಸ್ವಾಮಿ- ದ ಹಿಂದೂ ಪತ್ರಿಕೆ, 06-06-2022,ಲೇಖಕರು ಮಾಜಿ ಕೇಂದ್ರ ಸಚಿವರು ಮತ್ತು ಆರು ಅವಧಿಯ ಲೋಕಸಭಾ ಸದಸ್ಯರು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭ್ರಷ್ಟಾಚಾರದ ವಿರುದ್ಧ ಶಂಕರ್ ಇನ್ನೊಂದು ಹೋರಾಟ!

Published

on

  • ಚೇತನ್ ನಾಡಿಗೇರ್

ಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್‍ಗೋಪಾಲ್‍ ವರ್ಮ ಏನೇ ಚಿತ್ರ ಮಾಡಿದರೂ, ಕ್ರೈಮ್‍ ಹಿನ್ನೆಲೆಯಲ್ಲೇ ಮಾಡುತ್ತಾರೆ. ಹೀಗೆ ಬೇರೆಬೇರೆ ನಿರ್ದೇಶಕರು ಒಂದೇ ವಿಷಯವನ್ನಿಟ್ಟುಕೊಂಡು ಬೇರೆಬೇರೆ ರೀತಿ ವ್ಯಾಖ್ಯಾನಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಈಗ್ಯಾಕಪ್ಪಾ ಈ ಮಾತು ಎಂದರೆ, ಶಂಕರ್ ನಿರ್ದೇಶನದ ‘ಇಂಡಿಯನ್‍ 2’ ನಾಳೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮದೇ ಯಶಸ್ವಿ ಚಿತ್ರ ‘ಇಂಡಿಯನ್‍’ನ ಮುಂದುವರೆದ ಭಾಗ ಇದು. ಆ ಚಿತ್ರ ಬಿಡುಗಡೆಯಾಗಿ 26 ವರ್ಷಗಳ ನಂತರ ‘ಇಂಡಿಯನ್‍ 2’ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭ್ರಷ್ಟಾಚಾರದ ವಿಷಯವನ್ನಿಟ್ಟುಕೊಂಡು ಶಂಕರ್‍ ನಿರ್ದೇಶಿಸುತ್ತಿರುವ ಏಳನೇ ಚಿತ್ರ ಇದು.

ಶಂಕರ್‍ ಚಿತ್ರಗಳೆಂದರೆ ಅದ್ಧೂರಿತನ, ಹಿಟ್‍ ಹಾಡುಗಳು, ದೊಡ್ಡ ಕ್ಯಾನ್ವಾಸ್‍, ಮಾಸ್ ಅಂಶಗಳು ಇವೆಲ್ಲವೂ ಕಾಣುತ್ತದೆ. ಅದೇ ರೀತಿ ಗಮನಸೆಳೆಯುವ ಒಂದು ವಿಷಯವೆಂದರೆ, ಅದು ಭ್ರಷ್ಟಾಚಾರದ ವಿರುದ್ಧ ಶಂಕರ್‍ ನಿರಂತರ ಹೋರಾಟ. ತಮ್ಮ ನಿರ್ದೇಶನದ ಮೊದಲ ಚಿತ್ರದಿಂದಲೂ ಶಂಕರ್‍ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಶಂಕರ್‍ ಈ 31 ವರ್ಷಗಳಲ್ಲಿ ನಿರ್ದೇಶಿಸಿರುವುದು ಕೇವಲ 14 ಚಿತ್ರಗಳನ್ನು. ಆ ಪೈಕಿ ಏಳು ಚಿತ್ರಗಳು ಭ್ರಷ್ಟಾಚಾರ ಎಂಬ ವಿಷಯವನ್ನಿಟ್ಟುಕೊಂಡು ಮೂಲವಾಗಿಟ್ಟುಕೊಂಡು ಮಾಡಲಾಗಿದೆ.

ಈ ಪ್ರಯಾಣ ಶುರುವಾಗಿದ್ದು 1993ರಲ್ಲಿ ಬಿಡುಗಡೆಯಾದ ‘ಜಂಟಲ್‍ಮ್ಯಾನ್’ ಚಿತ್ರದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು ಕಥೆ ಮಾಡಿದ್ದರು. ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಲಂಚಾವತಾರದಿಂದ ಹೇಗೆ ಪ್ರತಿಭಾವಂತ ಯುವಕರು ಅವಕಾಶವಂಚಿತರಾಗುತ್ತಿದ್ದಾರೆ ಎಂದು ಹೇಳಿದರು. ಒಬ್ಬ ಸಾಮಾನ್ಯ ಮನುಷ್ಯ ಹೇಗೆ ಈ ವ್ಯವಸ್ಥೆಯ ವಿರುದ್ಧ ಹೋರಾಡುತ್ತಾನೆ ಎಂದು ತೋರಿಸಿದ್ದರು. ಆ ನಂತರ ‘ಇಂಡಿಯನ್‍’, ‘ಮುದಲ್ವನ್‍’, ‘ಅನ್ನಿಯನ್‍’, ‘ಶಿವಾಜಿ: ದಿ ಬಾಸ್‍’ ಮತ್ತು ‘ಇಂಡಿಯನ್‍ 2’ ಚಿತ್ರಗಳ ಮೂಲಕ ಅವರು ಇದೇ ವಿಷಯವನ್ನು ಹೇಳುವ ಪ್ರಯತ್ನವನ್ನು ಮಾಡಿದ್ದಾರೆ.

ವಿಷಯ ಅದೇ ಭ್ರಷ್ಟಾಚಾರ ಅಥವಾ ಲಂಚಾವತಾರವಿರಬಹುದು. ಅದೇ ವಿಷಯವನ್ನಿಟ್ಟುಕೊಂಡು ಶಂಕರ್‍ ಬೇರೆಬೇರೆ ರೀತಿಯಲ್ಲಿ ಕಮರ್ಷಿಯಲ್‍ ಆಗಿ ಚಿತ್ರಗಳನ್ನು ರೂಪಿಸಿರುವುದಿದೆಯಲ್ಲಾ ಅದು ವಿಶೇಷ ಎನಿಸುತ್ತದೆ. ‘ಇಂಡಿಯನ್‍’ನಲ್ಲಿ ಸ್ವಾತಂತ್ರ್ಯ ಹೋರಾಟಗಾರನೊಬ್ಬ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾನೆ. ತನ್ನ ಮಗನೇ ದೊಡ್ಡ ಭ್ರಷ್ಟ ಎಂದು ಗೊತ್ತಾದಾಗ ಅವನನ್ನೇ ಸಾಯಿಸುತ್ತಾನೆ. ‘ಮುದಲ್ವನ್’ ಎಂಬ ಚಿತ್ರದಲ್ಲಿ ಒಬ್ಬ ಸಾಮಾನ್ಯ ಮನುಷ್ಯ ಒಂದು ದಿನದ ಮುಖ್ಯಮಂತ್ರಿಯಾಗಿ ಭ್ರಷ್ಟಾಚಾರ ತಡೆಯುವ ಪ್ರಯತ್ನವನ್ನು ತನ್ನದೇ ಶೈಲಿಯಲ್ಲಿ ಮಾಡುತ್ತಾನೆ. ‘ಅನ್ನಿಯನ್‍’ನಲ್ಲಿ ಭ್ರಷ್ಟಾಚಾರ, Multiple Personality Disorder ಮತ್ತು ಗರುಡ ಪುರಾಣವನ್ನು ಶಂಕರ್‍ ಸೇರಿಸಿ ಕಥೆ ಮಾಡಿರುವ ರೀತಿಯೇ ವಿಶಿಷ್ಟ. ‘ಶಿವಾಜಿ’ಯಲ್ಲಿ ನೂರಾರು ಕೋಟಿ ಆಸ್ತಿ ಇರುವ ಶ್ರೀಮಂತನೊಬ್ಬ ಈ ವ್ಯವಸ್ಥೆಯಿಂದ ಬೇಸತ್ತು ಹೋರಾಟಕ್ಕೆ ಇಳಿಯುತ್ತಾನೆ. ಈಗ ‘ಇಂಡಿಯನ್‍ 2’ ಚಿತ್ರದಲ್ಲಂತೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಎಂದು Second War of Independence ಬಣ್ಣಿಸಿದ್ದಾರೆ. ಅಲ್ಲಿಗೆ ಭ್ರಷ್ಟಾಚಾರದ ವಿರುದ್ಧ ಶಂಕರ್‍ ಮತ್ತೊಂದು ಹೋರಾಟ ಶುರು ಮಾಡಿದ್ದಾರೆ.

ಇಷ್ಟಕ್ಕೂ ಶಂಕರ್‍ ಯಾಕೆ ಈ ವಿಷಯದ ಮೇಲೆ ಮೇಲಿಂದ ಮೇಲೆ ಸಿನಿಮಾ ಮಾಡುತ್ತಾರೆ? ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಯಾವುದೇ ವಿಷಯ ನನ್ನನ್ನು ಕಾಡಿದರೂ, ಆ ಕುರಿತು ಕಥೆ ಮಾಡುವುದಕ್ಕೆ ಪ್ರಯತ್ನ ಮಾಡುತ್ತೇನೆ. ಈ ಭ್ರಷ್ಟಾಚಾರ ನನ್ನನ್ನು ಪದೇಪದೇ ಕಾಡಿದೆ. ಅದನ್ನು ಕಮರ್ಷಿಯಲ್‍ ರೂಪದಲ್ಲಿ, ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡುತ್ತಾ ಬಂದಿದ್ದೇನೆ. ಒಂದು ವಿಷಯ ಸ್ಪಷ್ಟವಾದ ಮೇಲೆ, ಅದನ್ನು ಹೇಗೆ ತರಬೇಕು ಎಂದು ಯೋಚಿಸುತ್ತೇನೆ. ಪ್ರೇಕ್ಷಕರ ದೃಷ್ಟಿಕೋನದಿಂದ ಯೋಚಿಸುವುದಕ್ಕೆ ಪ್ರಯತ್ನಿಸುತ್ತೇನೆ. ಅವರಿಗೆ ಬೋರ್‍ ಆಗಬಾರದು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡುತ್ತಾ ಹೋಗುತ್ತೇನೆ’ ಎಂದು ಹೇಳಿಕೊಂಡಿದ್ದಾರೆ ಶಂಕರ್.

ಬಹುಶಃ ಅದೇ ಅವರ ಯಶಸ್ಸು ಎನ್ನಬಹುದೇನೋ? ಶಂಕರ್‍ ಒಂದು ಚಿತ್ರದ ಕಥೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಮನರಂಜನಾತ್ಮಕ ಅಂಶಗಳಿಗೂ ಅಷ್ಟೇ ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ಶಂಕರ್‍ ಪಾತ್ರಗಳು Larger than life ಎಂದನಿಸಬಹುದು. ಕೆಲವೊಮ್ಮೆ ತುಂಬಾ exaggeration ಅಂತನಿಸಬಹುದು. ಒಂದು ದಿನಕ್ಕೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವಾ? ಪಾರ್ಥಸಾರಥಿ ರಾಮಾನುಜ ಅಯ್ಯಂಗಾರ್‍ಗೆ ಅನ್ನಿಯನ್‍ ಆಗುವುದಕ್ಕೆ ಸಾಧ್ಯವಾ? 78ರ ವೃದ್ಧನೊಬ್ಬ ಸೇನಾಪತಿಯಾಗಿ ಹಾಗೆ ಹೊಡೆದಾಡುವುದಕ್ಕೆ ಸಾಧ್ಯವೇ? ಈ ಪ್ರಶ್ನೆಗಳು ಬರಬಹುದು. ತಾರ್ಕಿಕವಾಗಿ ನೋಡಿದರೆ ಇದು ಕಷ್ಟ. ಆದರೆ, ಶಂಕರ್ ಲಾಜಿಕ್‍ಗಿಂತ ಮ್ಯಾಜಿಕ್‍ನಲ್ಲಿ ನಂಬಿಕೆ ಇಟ್ಟವರು. ಏನೇನೋ ಮ್ಯಾಜಿಕ್‍ ಮಾಡಿ ಪ್ರೇಕ್ಷಕರನ್ನು ನಂಬಿಸುತ್ತಾರೆ. ತಮ್ಮ ಪ್ರಪಂಚದಲ್ಲಿ ಎಳೆದುಕೊಳ್ಳುತ್ತಾರೆ.

ಈಗೆಲ್ಲಾ Cinematic Universeಗಳ ಕಾಲ. ಯಶ್‍ರಾಜ್‍ ಸ್ಪೈ ಯೂನಿವರ್ಸ್‍, ಲೋಕೇಶ್‍ ಕನಕರಾಜ್‍ ಯೂನಿವರ್ಸ್, ರೋಹಿತ್‍ ಶೆಟ್ಟಿ ಪೊಲೀಸ್‍ ಯೂನಿವರ್ಸ್‍ಗಳು ಹೆಚ್ಚು ಸದ್ದು ಮಾಡುತ್ತಿವೆ. ಆದರೆ, ಕೆಲವು ವರ್ಷಗಳ ಹಿಂದೆಯೇ ‘ಇಂಡಿಯನ್‍’ನ ಸೇತುಪತಿ, ‘ಶಿವಾಜಿ: ದಿ ಬಾಸ್‍’ನ ಶಿವಾಜಿ ಮತ್ತು ‘ಮುದಲ್ವನ್‍’ನ ಪುಗಳೇಂದಿಯನ್ನಿಟ್ಟುಕೊಂಡು ಏಕೆ ಒಂದು ಚಿತ್ರ ಮಾಡಬಾರದು ಎಂದು ಅವರು ಕೆಲವು ವರ್ಷಗಳ ಹಿಂದೆಯೇ ಯೋಚಿಸಿದ್ದರಂತೆ. ಆದರೆ, ಸೂಕ್ತ ಪ್ರೋತ್ಸಾಹ ಸಿಗದ ಕಾರಣ ಸುಮ್ಮನಾದರಂತೆ.

ಈ ಕುರಿತು ಮಾತನಾಡಿರುವ ಅವರು, ‘2008ರಲ್ಲಿ ‘ಎಂದಿರನ್‍’ ಚಿತ್ರ ಮಾಡುವಾಗ, ಯಾಕೆ ನಾನೇ ಸೃಷ್ಟಿಸಿದ ಮೂರು ಪಾತ್ರಗಳನ್ನು ಒಂದೇ ಚಿತ್ರದಲ್ಲಿ ಯಾಕೆ ತರಬಾರದು ಎಂದನಿಸಿತು. ಒಂದು ಕ್ಷಣ ರೋಮಾಂಚನವಾಯ್ತು. ಖುಷಿಯಿಂದ ನನ್ನ ಸಹಾಯಕ ನಿರ್ದೇಕರನ್ನು ಕರೆದು ಐಡಿಯಾ ಹೇಳಿದೆ. ಅವರೆಲ್ಲರೂ ಇದು ಸಾಧ್ಯವಾ? ಎಂದು ಅನುಮಾನದಿಂದ ನೋಡಿದರು. ನಂತರ ಕೆಲವು ಹಿರಿಯ ತಂತ್ರಜ್ಞರಿಗೆ ಮತ್ತು ನನ್ನ ಸ್ನೇಹಿತರಿಗೆ ಹೇಳಿದೆ. ನನ್ನ ಮನಸ್ಸಿಗೆ ನೋವಾಗಬಹುದು ಎಂದು ಚೆನ್ನಾಗಿದೆ ಎಂದಷ್ಟೇ ಹೇಳಿ ಹೊರಟು ಹೋದರು. ಬಹುಶಃ ನನಗೆ ಆಗ ಪ್ರೋತ್ಸಾಹ ಸಿಕ್ಕಿದ್ದರೆ ಚಿತ್ರ ಮಾಡಿಬಿಟ್ಟಿರುತ್ತಿದ್ದೆನೇನೋ? ಕೆಲವು ವರ್ಷಗಳ ನಂತರ ‘ಅವೆಂಜರ್ಸ್’ ಚಿತ್ರ ನೋಡಿದಾಗ, ಅದು ಸಹ Marvel Cinematic Universeನ ಒಂದು ಭಾಗ ಆಗಿತ್ತು. ಒಂದು ಒಳ್ಳೆಯ ಐಡಿಯಾ ಇದ್ದರೆ, ತಕ್ಷಣವೇ ಅದನ್ನು ಕಾರ್ಯರೂಪಕ್ಕೆ ಇಳಿಸಬೇಕು ಎಂದು ನನಗೆ ಆಗ ಅರ್ಥವಾಯ್ತು. ಏಕೆಂದರೆ, ನಮ್ಮ ತರಹವೇ ಜಗತ್ತಿನಾದ್ಯಂತ ಹಲವರು ಹೊಸ ವಿಷಯಗಳ ಬಗ್ಗೆ ಯೋಚಿಸುತ್ತಿರುತ್ತಾರೆ. ಅವರು ಅದನ್ನು ಕಾರ್ಯರೂಪಕ್ಕೆ ತರುವ ಮುನ್ನ, ಮೊದಲು ನಾವು ಆ ಕೆಲಸ ಮಾಡಬೇಕು’ ಎಂದು ಹೇಳಿಕೊಂಡಿದ್ದಾರೆ ಶಂಕರ್‍.

Shankar Cinematic Universe ಯಾವತ್ತು ಕಾರ್ಯರೂಪಕ್ಕೆ ಬರುತ್ತದೋ ಗೊತ್ತಿಲ್ಲ. ಸೇತುಪತಿ, ಶಿವಾಜಿ ಮತ್ತು ಪುಗಳೇಂದಿಯನ್ನು ಒಟ್ಟಿಗೆ ಮುಂದಿಟ್ಟುಕೊಂಡು ಯಾವಾಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾರೋ ಗೊತ್ತಿಲ್ಲ. ಆದರೆ, ಸದ್ಯಕ್ಕಂತೂ ಭ್ರಷ್ಟಾಚಾರದ ವಿರುದ್ಧ ಶಂಕರ್ ತಮ್ಮ ಹೋರಾಟ ಮುಂದುವರೆಸಿದ್ದಾರೆ. ‘ಇಂಡಿಯನ್‍ 2’ ಬಿಡುಗಡೆಯಾಗಿ ಆರು ತಿಂಗಳಲ್ಲೇ ಅದೇ ಸೇತುಪತಿ, ‘ಇಂಡಿಯನ್‍ 3’ ಆಗಿ ಮತ್ತೆ ಬರಲಿದ್ದಾರೆ. ಅದಾಗಿ ಸ್ವಲ್ಪ ದಿನಗಳಿಗೆ ‘ಗೇಮ್‍ ಚೇಂಜರ್‍’ ಎಂಬ ರಾಮ್‍ಚರಣ್‍ ತೇಜ ಅಭಿನಯದ ಇನ್ನೊಂದು ಚಿತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸಲಿದ್ದಾರೆ. ಪಾತ್ರಗಳು ಬದಲಾಗಬಹುದು, ಶಂಕರ್‍ ಹೋರಾಟ ಮಾತ್ರ ನಿರಂತರವಾಗಿ ಮುಂದುವರೆಯುತ್ತಿರುವುದು ವಿಶೇಷ. (ಬರಹ : ಚೇತನ್ ನಾಡಿಗೇರ್, ಫೇಸ್‌ಬುಕ್‌ ಬರಹ)ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್‍ ಆಫ್‍ ದಿ ನೇಷನ್‍ ಅಂತಾರೆ..!

Published

on

  • ಚೇತನ್ ನಾಡಿಗೇರ್

‘ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿ ಆಗ್ತಿಲ್ಲ, ಆ ಬಗ್ಗೆ ಮಾತಾಡೋಣ. ಆಟೋ ಚಾಲಕರಿಗೆ ಬೈಕ್‍ ಸವಾರರಿಂದ ತೊಂದರೆ ಆಗುತ್ತಿದೆ ಆ ಬಗ್ಗೆ ಮಾತಾಡೋಣ. ಸರ್ಕಾರಿ ಶಾಲೆಗಳಲ್ಲಿ ಬಿಸಿಊಟ ಅಡುಗೆ ಮಾಡುವವರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಸಂಬಳ. ಅದರ ಬಗ್ಗೆ ಮಾತಾಡೋಣ. ಮಿಕ್ಕವರೆಲ್ಲಾ ಬಹಳ ಬ್ಯುಸಿಯಾಗಿರುವುದರಿಂದ ನಾವು ಇದರ ಬಗ್ಗೆ ಮಾತಾಡೋಣ್ವಾ?’

ಮಾರ್ಮಿಕವಾಗಿ ಕೇಳಿದರು ಪ್ರಕಾಶ್‍ ರೈ. ಅವರಿಗೆ ಆ ವಿಷಯದ ಬಗ್ಗೆ ಮಾತಾಡುವುದಕ್ಕೆ ಇಷ್ಟವಿರಲಿಲ್ಲ. ಆದರೂ ಕನ್ನಡ ಚಿತ್ರರಂಗದಲ್ಲಿ ಕಳೆದ ಒಂದು ತಿಂಗಳಲ್ಲಿ ಆಗುತ್ತಿರುವ ಬೆಳವಣಿಗೆ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂಬ ಪ್ರಶ್ನೆ ಬಂತು. ಅದನ್ನು ಬಹಳ ಜಾಣ್ಮೆಯಿಂದ ತಳ್ಳಿಹಾಕಿದರು ರೈ. ಅದೊಂದು ಬಿಟ್ಟು ಹಲವು ವಿಷಯಗಳ ಬಗ್ಗೆ ಮಾತನಾಡಿದರು. ತಮ್ಮ ಇಷ್ಟದ ಚಿತ್ರದ ಬಗ್ಗೆ, ಕನ್ನಡ ಚಿತ್ರರಂಗದ ಸದ್ಯದ ಪರಿಸ್ಥಿತಿಯ ಬಗ್ಗೆ, ಸೋಷಿಯಲ್ ಮೀಡಿಯಾವನ್ನು ಕೆಲವರು ಕೆಟ್ಟದಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ, ತಂದೆ-ಮಗನ ಸಂಬಂಧದ ಬಗ್ಗೆ, STARDOM ಸಂಭಾಳಿಸುವ ಬಗ್ಗೆ, ಕಲಿಕೆಯ ಬಗ್ಗೆ … ಹೀಗೆ ಹಲವು ವಿಷಯಗಳನ್ನು ಅವರು ಮಾತನಾಡಿದರು. ಅದಕ್ಕೆ ವೇದಿಕೆಯಾಗಿದ್ದು, ಆರ್. ಚಂದ್ರು ನಿರ್ಮಾಣದ, ‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಫಾದರ್‍’ ಚಿತ್ರದ ಪತ್ರಿಕಾಗೋಷ್ಠಿ. ಈ ಚಿತ್ರದಲ್ಲಿನ ತಮ್ಮ ಪಾತ್ರ ಮತ್ತ ತಂದೆಯ ವ್ಯಾಖ್ಯಾನವನ್ನು ರೈ ಎಷ್ಟು ಚೆನ್ನಾಗಿ ಮಾಡಿದರು ಗೊತ್ತಾ? ನೀವೇ ಓದಿ …

ನಾನು ನನ್ನ ಮೂರು ದಶಕಗಳ ವೃತ್ತಿಜೀವನದಲ್ಲಿ ಯಶಸ್ಸಿನಿಂದ ಹಾಳಾದ ಬಹಳಷ್ಟು ಜನರನ್ನು ನೋಡಿದ್ದೇನೆ. ಸೋಲಿನಿಂದ ಹಾಳಾದವರನ್ನು ನೋಡಿದ್ದು ಕಡಿಮೆ. ಯಶಸ್ಸು ಎನ್ನುವುದು ಒಂದು ನಶೆ. ಯಶಸ್ವಿಯಾಗುವುದು ದೊಡ್ಡ ವಿಷಯವಲ್ಲ. ಅದನ್ನು ದಕ್ಕಿಸಿಕೊಳ್ಳೋದು, ಉಳಿಸಿಕೊಳ್ಳೋದು ಬಹಳ ಮುಖ್ಯ. ಹಾಗಾಗಿ, ಡಾ. ರಾಜಕುಮಾರ್, ರಜನಿಕಾಂತ್‍, ಕಮಲ್ ಹಾಸನ್‍ ಮುಂತಾದವರು ಆರು ದಶಕ, ಐದು ದಶಕಗಳ ಕಾಲ ಕೆಲಸ ಮಾಡಿದವರನ್ನು ನಾವು ನೋಡಬಹುದು. ಈಗ ಅಂಥವರು ಸಿಗುವುದೇ ಇಲ್ಲ ನಮಗೆ. ಬಹಳಷ್ಟು ಯುವಕರು stardomಗೆ ತಯಾರಾಗಿರುವುದಿಲ್ಲ. ಎಷ್ಟು ನಾವು ಅದನ್ನು ಇಳಿಸಿಕೊಂಡು ಹೊರಗೆ ಬರುತ್ತೀವೋ, ಅಷ್ಟು ಒಳ್ಳೆಯದು. ಇಲ್ಲದಿದ್ದರೆ ಅದು ನಮ್ಮನ್ನು ಸುಟ್ಟುಹಾಕುತ್ತದೆ. ಕೆಲವರು ಕಲಿಯುತ್ತಿದ್ದಾರೆ, ಕೆಲವರು ಕಲಿಯುವುದಿಲ್ಲ.

ಪ್ರತಿಯೊಬ್ಬರಿಗೂ ಇಗೋ ಇರಬೇಕು. ಅದು ಸ್ವಾಭಿಮಾನವಾಗಿರುವವರೆಗೂ ಇರಬೇಕು. ಅದು ಅಹಂಕಾರವಾದರೆ ಇಬ್ಬರಿಗೂ ಒಳ್ಳೆಯದಲ್ಲ. ಒಂದು ಇಗೋ ನನ್ನನ್ನು ಬೆಳೆಸುವುದಕ್ಕೆ ಸಾಧ್ಯವಾದರೆ, ಇನ್ನೊಂದನ್ನು ರೂಪಿಸುವುದಕ್ಕೆ ಸಾಧ್ಯವಾದರೆ, ಒಂದು ಧಾರ್ಮಿಕ ಕೋಪವಾದರೆ ಒಳ್ಳೆಯದಲ್ವಾ? ಅದು ಆಯಾ ಪರಿಸ್ಥಿತಿಗೆ ಬದಲಾಗುತ್ತಿರುತ್ತದೆ. ಒಂದು ಪದದ ಅರ್ಥ ಪದಕೋಶದಲ್ಲಿ ಸಿಗುವುದಿಲ್ಲ, ಆ ಸಂದರ್ಭದಲ್ಲಿ ಸಿಗುತ್ತದೆ. ಯಾವ ಸಂದರ್ಭದಲ್ಲಿ ಆ ಪದವನ್ನು ಉಪಯೋಗಿಸುತ್ತೀವೋ, ಆ ಪದಕ್ಕೆ ಅರ್ಥ ಇರುತ್ತದೆಯೇ ಹೊರತು, ಇಗೋ ಎಂದರೆ ಒಂದು definite ಅರ್ಥವಿರುವುದಿಲ್ಲ.

ಕೆಲವು ನಟರು ಸಹ ತಾವು ಜಿಮ್‍ಗೆ ಹೋಗಿಯೇ ನಟ ಆಗುತ್ತೀನಿ ಎಂದರೆ ಆಗುವುದಿಲ್ಲ. ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ತಿಳಿದುಕೊಳ್ಳೋದು, ಕಲೆಯ ಪ್ರಕಾರಗಳನ್ನು ಅರಿತುಕೊಳ್ಳೋದು, ಅದರಿಂದ ನನಗೆ ಹೆಸರಾಗಬೇಕೆಂದು ಬಯಸೋದು ಸಹ ಮುಖ್ಯ. ಎಲ್ಲಕ್ಕಿಂತ ಹೆಚ್ಚಾಗಿ, ಪ್ರತಿಯೊಬ್ಬರು ಗೆಲ್ಲಬೇಕೆಂಬ ಒತ್ತಡ ಯಾಕೆ? ಸೋಲು ಸಂತೋಷ ಯಾಕೆ ನಾವು ಕೊಟ್ಟಿಲ್ಲ? ಕ್ಷಮಿಸುವ ಸಂತೋಷವನ್ನು ನಾವು ಯಾಕೆ ಕೊಟ್ಟಿಲ್ಲ? ನಮಗೂ ಅವನೇನು ಹೇಳುತ್ತೇನೆ ಎನ್ನುವ ತಾಳ್ಮೆಯೇ ಇಲ್ಲ. ನಾನು ಅಂದುಕೊಂಡಿರುವ ಸಿನಿಮಾ ತೆಗೆದಿದ್ದೀಯಾ? ಅಂತಲೇ ಎಲ್ಲರೂ ಕೇಳೋದು. ಏನು ಹೇಳುತ್ತಾನೆ ಎನ್ನುವ ತಾಳ್ಮೆಯೇ ಯಾರಿಗೂ ಇಲ್ಲ.

ನಾನೇ ಈಗ ಮತ್ತೆ ಕಲಿಯಬೇಕಾದ ಪರಿಸ್ಥಿತಿಯಲ್ಲಿದ್ದೀನಿ. ಇಷ್ಟು ಸಿನಿಮಾಗಳನ್ನು ಮಾಡಿದ್ದೇನೆ, ಹೊಸಹೊಸ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದೇನೆ. ಇವತ್ತು ಹೊಸಬರ ಜೊತೆಗೆ ಮಾಡುವಾಗ, ಅವರು ಬೇರೇನೋ ಕೇಳುತ್ತಿದ್ದಾರೆ ಅಂತನಿಸುತ್ತಿದೆ. ಹಾಗಾಗಿ, ಇದುವರೆಗೂ ಕಲಿತಿದ್ದನ್ನು ಮರೆತು, ಹೊಸದಾಗಿ ಕಲಿಯಬೇಕು. ಇದೊಂದು ಸವಾಲು. ಖುಷಿಯಾಗುತ್ತಿದೆ. ಇತ್ತೀಚೆಗೆ ‘ರಾಯನ್‍’ ಸಿನಿಮಾದ ಸಮಾರಂಭದಲ್ಲಿದ್ದೆ. ಆ ಚಿತ್ರಕ್ಕೆ ರೆಹಮಾನ್‍ ಸಂಗೀತ ಸಂಯೋಜಿಸುತ್ತಿದ್ದು, ರೆಹಮಾನ್‍ ಚಿತ್ರರಂಗಕ್ಕೆ ಬಂದು 30 ವರ್ಷಗಳಾಗಿವೆ. ನನ್ನ ಮೊದಲ ತಮಿಳು ಚಿತ್ರಕ್ಕೆ ಅವರೇ ಸಂಗೀತ ನಿರ್ದೇಶಕರು.

30 ವರ್ಷಗಳ ನಂತರವೂ ನಾವಿನ್ನೂ ಇದ್ದೀವಲ್ಲ ಎನ್ನುವುದೇ ಬಹಳ ಸಂತೋಷದ ವಿಷಯ. ಒಬ್ಬ ಕಲಾವಿದ ಬೆಳೆಯೋದು ಬರೀ ಅವನ ಪ್ರತಿಭೆಯಿಂದ ಮಾತ್ರವಲ್ಲ. ಜನರ ಪ್ರೀತಿಯಿಂದ ಮತ್ತು ಅದಕ್ಕಿಂತ ಜನರು ಅವನ ಮೇಲಿಟ್ಟಿರುವ ನಂಬಿಕೆಯಿಂದ. ಆ ನಂಬಿಕೆಯನ್ನು 30 ವರ್ಷಗಳ ಕಾಲ ಉಳಿಸಿಕೊಂಡಿದ್ದೇವೆ ಎನ್ನುವುದೇ ನಮ್ಮ ಹೆಮ್ಮೆ ಆಗುತ್ತದೆ. ಏಕೆಂದರೆ, ಅವರು ನಮ್ಮನ್ನು ನಂಬಿ ಒಂದು ವೇದಿಕೆ ಕೊಟ್ಟಿದ್ದಾರೆ. ಅವರಿಗೆ ಇಷ್ಟ ಆದರಂತೂ, ನಿಮ್ಮನ್ನು ಪ್ರೀತಿಸೋಕೆ ಕಾರಣಗಳನ್ನು ಹುಡುಕುತ್ತಾನೆ. ಒಬ್ಬ ವ್ಯಕ್ತಿಯ ಬೆಳವಣಿಗೆ ಬರೀ ಅವನು ಬೆಳೆದ ಎತ್ತರ ನೋಡಿ ಲೆಕ್ಕ ಹಾಕುವುದಲ್ಲ, ಅವನು ಎತ್ತರವಾಗಿ ಬೆಳೆದ ಮೇಲೆ ಎಷ್ಟು ಜನರನ್ನ ಬೆಳೆಸಿದ ಎನ್ನುವುದು ಬಹಳ ಮುಖ್ಯ.

‘ನಾನು ನನ್ನ ಕನಸು’ ಇರಬಹುದು, ‘ಒಗ್ಗರಣೆ’ ಅಥವಾ ‘ಇದೆಂಥಾ ರಾಮಾಯಣ’ ಚಿತ್ರಗಳು ನನ್ನ ಅಭಿರುಚಿ. ತಂದೆ-ಮಗನ ಸಂಬಂಧದ ಕುರಿತು ಸಾಕಷ್ಟು ಚಿತ್ರೆಗಳು ಬಂದಿವೆ. ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್‍ ಆಫ್‍ ದಿ ನೇಷನ್‍ ಅಂತಾರೆ. ಏಕೆಂದರೆ, ಅಷ್ಟೊಂದು ತಂದೆಯ ಪಾತ್ರಗಳನ್ನು ನಾನು ಇದುವರೆಗೂ ಮಾಡಿಬಿಟ್ಟಿದ್ದೀನಿ. ಇದು ತೀವ್ರವಾಗಿ ಕಾಡುವ ಸಿನಿಮಾ. ತಂದೆ-ಮಗನ ಬಾಂಧವ್ಯಕ್ಕಿಂತ, ಇಲ್ಲಿ ಮಗನನ್ನು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಹಿರಿಯರನ್ನೂ ಅರ್ಥ ಮಾಡಿಕೊಳ್ಳಬೇಕು ಎಂದು ಸೂಕ್ಷ್ಮವಾಗಿ ಹೇಳಲಾಗಿದೆ. ಪರಿಸ್ಥಿತಿಯ ವಿಕೋಪಗಳಿಗೆ ಅಥವಾ ಕೆಲವು ಒತ್ತಡಗಳಿಗೆ ಆ ಸಂಬಂಧ ಪ್ರಶ್ನಿಸಲ್ಪಡುತ್ತದೆ. ಜೀವನದಲ್ಲಿ ಕೆಲವು ಸಂಘರ್ಷಗಳು ಬಂದಾಗ ನಮಗೊಂದು ಲಿಬರೇಶನ್ ‍ಸಿಗುತ್ತದೆ. ಒಂದು ಪರಿಸ್ಥಿತಿ ಎದುರಾದಾಗ ನಮ್ಮಳೊಗಿರುವ ಇನ್ನೊಂದು ಶಕ್ತಿ ನಮಗೆ ಅರ್ಥವಾಗೋದು ಅಥವಾ ನಾವು ಇನ್ನಷ್ಟು ಬೆಳೆಯೋದಕ್ಕೆ ಸಾಧ್ಯ. ಅದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ಇದೊಂದು ಜನ ಸಾಮಾನ್ಯರ ಸಿನಿಮಾ. ನಿಜವಾಗಲೂ ಕಾಡುವ ಸಿನಿಮಾ.

ಒಬ್ಬ ಗಂಡಸು ಮಕ್ಕಳು ಹುಟ್ಟುವ ತನಕ ಬರೀ ಒಬ್ಬ ಗಂಡ ಆಗಿರುತ್ತಾನೆ. ಮಕ್ಕಳು ಹುಟ್ಟಿದ ನಂತರ ಅಪ್ಪ ಎನ್ನುವ ಸ್ಥಿತಿ. ಅಪ್ಪನಿಗೂ, ಮಕ್ಕಳಿಗೂ ಒಂದೇ ವಯಸ್ಸು. ಅದರಲ್ಲೂ ಒಂದು ಹೆಣ್ಣು ಮಗಳ ಜೊತೆಗಿನ ಸಂಬಂಧ ಎಂದರೆ, ಅವನ ಜೀವನದಲ್ಲಿ ಬರುವ ಎಲ್ಲಾ ಸಂಬಂಧಗಳು, ಅಂದರೆ ತಾಯಿ ಇರಬಹುದು, ಹೆಂಡತಿ ಇರಬಹುದು, ತಂಗಿ ಇರಬಹುದು, ಸ್ನೇಹಿತೆ ಇರಬಹುದು. ಆದರೆ, ಮಗಳ ಜೊತೆಗೆ ಬೇರೆ ಸಂಬಂಧ ಇರುತ್ತದೆ. ಚೆನ್ನಾಗಿ ಬೆಳಸಿ ಯಾವುದನ್ನೂ ಎದುರು ನೋಡದೆ ಬಿಟ್ಟು ಕೊಡುವುದು. ತಂದೆ-ಮಗನ ಸಂಬಂಧ ಹಾಗಿರುವುದಿಲ್ಲ. ನನ್ನ ನಂತರ ನೀನು, ನನ್ನ ಇನ್ನೊಂದು ಛಾಯೆ ನೀನು ಎನ್ನುವ ಸಂಬಂಧ ಅದು. ಅದೊಂಥರಾ Love-Hate relationship. ತಂದೆ ತನ್ನ ಮಗನಿಗೆ ಕಲಿಸೋದಕ್ಕಿಂತ, ಅವನ behaviourನಿಂದ ಮಕ್ಕಳು ಕಲಿಯೋದು ತುಂಬಾ ಇರುತ್ತದೆ.

ನನಗೆ ನನ್ನ ಮಗಳ ಜೊತೆಗೆ ಇರುವ relationship ಬೇರೆ, ಮಗನ ಜೊತೆಗೆ ಇರುವ ಸಂಬಂಧ ಬೇರೆ. ಇವತ್ತಿನ ಪ್ರಪಂಚದಲ್ಲಿ ಹೊರಗೆ ಹೋಗಬೇಕು. ಸಾಕಷ್ಟು ಸಮಸ್ಯೆಗಳು ಇರುತ್ತವೆ. ಅದನ್ನು ಹೇಳಿಕೊಳ್ಳುವುದಕ್ಕೆ ಆಗಲ್ಲ. ಅದನ್ನು ಅವರೇ ನಿಭಾಯಿಸಬೇಕು. ಮಗ ಎಷ್ಟೇ ದೊಡ್ಡವನಾದರೂ, ತಂದೆಗೆ ಇನ್ನೂ ಚಿಕ್ಕವನು ಎಂದನಿಸುತ್ತದೆ. ಅದರ ಜೊತೆಗ ಮಗನಿಗೆ ತನ್ನದೇ ಆದ ನಿರ್ಧಾರಗಳೂ ಇರುತ್ತವೆ. ಅದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ನಿನಗೆ ಇಷ್ಟು ಮಾಡಿದೆ, ನೀನೇನು ವಾಪಸ್ಸು ಕೊಡುತ್ತೀಯ ಎನ್ನುವುದಕ್ಕಿಂತ ಅವನನ್ನೂ ಅರ್ಥ ಮಾಡಿಕೊಳ್ಳಬೇಕಾಗುತ್ತದೆ.

ಒಬ್ಬ ನಟನಾಗಿ ನನಗೆ ‘ನಾನು ನನ್ನ ಕನಸು’ ಬಹಳ ಇಷ್ಟವಾದ ಮತ್ತು ಕಾಡುವ ಸಿನಿಮಾ. ಏಕೆಂದರೆ, ನನ್ನ ಹೆಂಡತಿ ನನ್ನ ಹೆಂಡತಿಯಾಗಿಯೇ ಇರುತ್ತಾಳೆ. ಮಗಳು ಮದುವೆಯಾದಾಗ, ಮಾವ ಆಗ ನನಗೆ ಅರ್ಥಾವಾಗುತ್ತಾನೆ. ಅಲ್ಲಿಯವರೆಗೂ ಹೆಂಡತಿ ಅಪ್ಪ ಅಂತ ಜಗಳ ಆಡುತ್ತಿರುತ್ತೀವಿ. ನನ್ನ ಮಗಳಿಗೆ ಮಾವ ಸಿಗುತ್ತಾನೆ ಎಂದಾಗ, ನನಗೆ ಹೆಂಡತಿ ಅರ್ಥವಾಗುತ್ತಾ ಹೋಗುತ್ತಾಳೆ. ಅವಳು ಇನ್ನೊಬ್ಬಳ ಮಗಳಾಗಿದ್ದಳು, ನಾನು ಅವಳನ್ನು ಇನ್ನೊಬ್ಬರ ಮಗಳು ಅಂತ ನೋಡಿರಲೇ ಇಲ್ಲ. ನನ್ನ ಮಗಳನ್ನು ನಾನು ನೋಡುತ್ತಿದ್ದ ಹಾಗೆ, ಅವಳ ಅಪ್ಪ ಸಹ ಅವಳನ್ನು ಹಾಗೆಯೇ ನೋಡುತ್ತಿದ್ದ. ಮಗಳು ಮತ್ತು ತಂದೆಯ ಸಂಬಂಧದಲ್ಲಿ ಆ ಚಿತ್ರ ನನಗೆ ಬಹಳಷ್ಟು ವಿಷಯಗಳನ್ನು ಕಲಿಸಿತು. ಆ ಚಿತ್ರವನ್ನು ಬರೆಯುತ್ತಾ, ನಿರ್ದೇಶನ ಮಾಡುತ್ತಾ ತುಂಬಾ ಕಲಿತೆ. ಹಾಗಾಗಿ, ನನಗೆ ಅದು ಬಹಳ ಇಷ್ಟವಾದ ಚಿತ್ರ.

ಮಾಣಿಕ್ಯ ಒಳ್ಳೆಯದೇ? ಅದು ಕೋತಿ ಕೈಗೆ ಸಿಕ್ಕಿದರೆ? ಅದರ ಬಗ್ಗೆ ನಾವು ಯೋಚಿಸಬೇಕು. ಪ್ಲಸ್‍, ಮೈನಸ್‍ ಇದ್ದೇ ಇರುತ್ತದೆ. ಒಳಗಿನ ಅಸಹ್ಯವೂ ಹೊರಗೆ ಬರುತ್ತದೆ, ವಿಕಾರಗಳೂ ಹೊರಗ ಬರುತ್ತಿವೆ. ಅವೆರಡೂ ಬರಬೇಕು. ಸೋಷಿಯಲ್‍ ಮೀಡಿಯಾಗಳು ಬಹಳ ಮುಖ್ಯವಾದ ವಿಷಯಗಳನ್ನು ತಲುಪಿಸೋಕೆ ಮಹತ್ವದ ಪಾತ್ರ ವಹಿಸುತ್ತಿದೆ. ಇದರಲ್ಲಿ ಒಳ್ಳೆಯದೂ ಇದೆ, ಕೆಟ್ಟದ್ದೂ ಇದೆ. ಅವೆರಡರಲ್ಲಿ ನಾವು ಯಾವುದನ್ನು ತೆಗೆದುಕೊಳ್ಳುತ್ತೇವೆ ಎನ್ನುವುದು ಬಹಳ ಮುಖ್ಯ. ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರದಲ್ಲಿ ಅನಂತ್‍ ನಾಗ್‍ ಒಂದು ಸಂಭಾಷಣೆ ಹೇಳ್ತಾರೆ. ‘ನಮ್ಮೆಲ್ಲರಲ್ಲೂ ಕಪ್ಪು ನಾಯಿ, ಬಿಳಿ ನಾಯಿ ಇರತ್ತೆ. ಕಪ್ಪು ನಾಯಿ ಕೆಟ್ಟದ್ದು, ಬಿಳಿ ನಾಯಿ ಒಳ್ಳೇದು.

ಅವೆರಡರಲ್ಲಿ ನಾವು ಯಾವುದಕ್ಕೆ ಊಟ ಜಾಸ್ತಿ ಹಾಕುತ್ತೇವೆ ಅನ್ನೋದು ಮುಖ್ಯ’ ಅಂತಾರೆ. ನಾವು ಎರಡನ್ನೂ ನೋಡಬೇಕು. ಅಣು ಬಾಂಬ್‍ ಕಂಡುಹಿಡಿದಿದ್ದು ಎನರ್ಜಿಗೆ, ಇನ್ನೊಬ್ಬರನ್ನು ಕೊಲ್ಲುವುದಕ್ಕೆ ಅಲ್ಲ. ಇಲ್ಲಿ ನಮ್ಮ ಮನಸ್ಸಾಕ್ಷಿ, ಆತ್ಮಾವಲೋಕನ ಬಹಳ ಮುಖ್ಯ. ಇದನ್ನು ಯಾರೋ ಒಬ್ಬರು ನೋಡುವುದಿಲ್ಲ. ಹೆಣ್ಮಕ್ಕಳು ನೋಡುತ್ತಿರುತ್ತಾರೆ. ಸಮಾಜದ ಒಂದು ಸ್ವಾಸ್ತ್ಯ ನೋಡುತ್ತಿರುತ್ತದೆ. ಅವರಿಗೆ ನಾವೇನು ತಲುಪಿಸಬೇಕು, ಯಾವುದು ಮುಖ್ಯ ಆಗಬೇಕು ಎಂಬುದು ನಮ್ಮ ಕೈಯಲ್ಲಿರೋದು. ಇವತ್ತಿನ ಯುವ ಜನಾಂಗದ ತಪ್ಪೇನು ಇಲ್ಲ. ಒಬ್ಬಿಬ್ಬರು ತಪ್ಪು ಮಾಡಿದರೆ, ಎಲ್ಲರೂ ತಪ್ಪು ಮಾಡುತ್ತಾರೆ ಎನ್ನುವುದು ತಪ್ಪು. Let’s be responsible ಅಷ್ಟೇ. (ಬರಹ : ಚೇತನ್ ನಾಡಿಗೇರ್, ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ

Published

on

  • ಶಂಕರ ದೇವರು ಹಿರೇಮಠ, ಸಾಹಿತಿಗಳು

ಮಸ್ಕಿ ಭಾರತ ದೇಶ ಕೃಷಿ ಪ್ರಧಾನವಾದ ದೇಶ.ಇಲ್ಲಿ ಹಲವಾರು ಭಾಷೆ, ಹಲವಾರು ಸಂಸ್ಕೃತಿ ಹಾಗೂ ಹಲವಾರು ರಾಜ್ಯಗಳನ್ನು ಒಳಗೊಂಡ ಭಾರತ. ತನ್ನೊಳಗೆ ವಿಭಿನ್ನ ಸಂಸ್ಕೃತಿಯನ್ನು ಐತಿಹಾಸಿಕ ಹಿನ್ನೆಲೆಯನ್ನು ಒಳಗೊಂಡಿದೆ. ಇಲ್ಲಿ ಆಚರಿಸುವ ಬಹುತೇಕ ಹಬ್ಬಗಳು ಹಳ್ಳಿಯ ಸೊಗಡಿನೊಂದಿಗೆ ಸಮ್ಮಿಲಿತಗೊಂಡಿವೆ. ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಬಹುತೇಕ ಹಬ್ಬಗಳ ಹಿನ್ನೆಲೆಯನ್ನು ಒಳಗೊಂಡಿವೆ .

ಮಳೆಗಾಲದಲ್ಲಿ ಬರುವ ವಿಶೇಷ ಹಬ್ಬವೇ ಮಣ್ಣೆತ್ತಿನ ಅಮಾವಾಸ್ಯೆ. ಮಳೆಗಾಲದ ಪ್ರಾರಂಭದ ದಿನಗಳಲ್ಲಿ ಬರುವ ಈ ಹಬ್ಬ ಉತ್ತರ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡುತ್ತದೆ .ಮುಂಗಾರು ಪ್ರಾರಂಭವಾಗಿ ರೈತರು ಕೃಷಿ ಚಟುವಟಿಕೆಯನ್ನು ಪ್ರಾರಂಭಿಸಿ ಹೊಲಗಳನ್ನು ಹಸನು ಮಾಡಿ ಬಿತ್ತನೆ ಹಾಗೂ ನಾಟಿಯನ್ನು ಮಾಡಿರುತ್ತಾರೆ. ಹೊಲಗಳು ಹಸಿರಿನಿಂದ ಕಂಗೊಳಿಸುತ್ತಿರುತ್ತವೆ ಇಂತಹ ದಿನಗಳಲ್ಲಿ ರೈತರು ವಿಶ್ರಾಂತಿಯನ್ನು ಪಡೆಯುವ ಜೊತೆಗೆ ತಮ್ಮ ಒಡನಾಡಿಯಾದ ಜಾನುವಾರುಗಳನ್ನು, ಎತ್ತುಗಳನ್ನು ಪ್ರೀತಿಯಿಂದ ಪೋಷಿಸುತ್ತಾರೆ .ಕಾರ ಹುಣ್ಣಿಮೆಯ ನಂತರ ಬರುವ ಮಣ್ಣೆತ್ತಿನ ಅಮವಾಸೆ ಉತ್ತರ ಕರ್ನಾಟಕದಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಬಹು ಸಂಭ್ರಮದ ಹಬ್ಬ .

ರೈತರ ಒಡನಾಡಿ ಹಾಗೂ ರೈತರ ಉಸಿರೆಂದರೆ ಎತ್ತುಗಳು ಎತ್ತುಗಳೊಂದಿಗೆ ರೈತರು ಅವಿನಾಭಾವ ಸಂಬಂಧವನ್ನು ಹೊಂದಿರುತ್ತಾರೆ .ಎತ್ತುಗಳನ್ನು ಕೇವಲ ಪ್ರಾಣಿಗಳೆಂದು ಪರಿಗಣಿಸದೆ ತಮ್ಮ ಮನೆಯ ಸದಸ್ಯರಂದೇ ಪರಿಗಣಿಸಿ ಅವುಗಳನ್ನು ಪ್ರೀತಿಯಿಂದ ಅಕ್ಕರೆಯಿಂದ ಸಾಕುತ್ತಿರುತ್ತಾರೆ. ರಾಮ, ಲಕ್ಷ್ಮಣ ಭೀಮ, ಕರಿಯ, ಚೆನ್ನ,ಬಸವ, ಕೆಂಪ ಹಾಗೂ ತಮ್ಮ ನೆಚ್ಚಿನ ನಾಯಕ ನಟರ ಹೆಸರನ್ನು ತಮ್ಮ ಪ್ರೀತಿಯ ಎತ್ತುಗಳಿಗೆ ಇಟ್ಟು ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಾರೆ. ರೈತರ ಕಷ್ಟ ,ಸುಖಗಳಲ್ಲಿ ಹಾಗೂ ಕೃಷಿ ಚಟುವಟಿಕೆಗಳಲ್ಲಿ ಭಾಗಿಯಾಗುವ ಎತ್ತುಗಳಿಗೆ ರೈತರು ಅಪಾರ ಗೌರವವನ್ನು ನೀಡುತ್ತಾರೆ.

ಶಂಕರ ದೇವರು ಹಿರೇಮಠ, ಸಾಹಿತಿಗಳು

ಮಣ್ಣೆತ್ತಿನ ಅಮಾವಾಸ್ಯೆ ದಿನದ ಮೊದಲೇ ಹಳ್ಳ, ಹೊಳೆ, ಗದ್ದೆಗಳಿಂದ ಮಣ್ಣನ್ನು ತಂದು ಜೋಡಿ ಎತ್ತುಗಳನ್ನು ಮಾಡಿ ಎತ್ತುಗಳಿಗೆ ಮೇವು ಹಾಕುವ ಒಂದು ಗೋದಲಿಯನ್ನು ಮಾಡುತ್ತಾರೆ. ಎತ್ತುಗಳನ್ನು ಮಣ್ಣಿನಿಂದಲೇ ಮಾಡಿ ಅವುಗಳನ್ನು ದೇವರ ಮನೆಯ ಜಗಲಿ ಮೇಲಿಟ್ಟು ಪೂಜೆ ಮಾಡುತ್ತಾರೆ. ಇನ್ನೂ ಕೆಲವರು ಹೊಲಗಳಿಗೆ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಮಾಡುತ್ತಾರೆ .

ರೈತ ಹಾಗೂ ಎತ್ತುಗಳಿಗೆ ಅವಿನಾಭಾವ ಸಂಬಂಧ ಶತಶತಮಾನಗಳಿಂದ ಇದೆ. ಭಾರತದ ಪ್ರತಿಯೊಂದು ಕೃಷಿ ಕುಟುಂಬವು ಕೃಷಿಯೊಂದಿಗೆ ಹಾಗೂ ಮಣ್ಣಿನೊಂದಿಗೆ ಅವಿನಾಭಾವ ಸಂಬಂಧದ ನಂಟಿದೆ .ಮಳೆಗಾಲದಲ್ಲಿ ಬಿತ್ತನೆಯಾಗಿ ಬೆಳೆ ಬೆಳೆದು ಹಸಿರಿನಿಂದ ಭೂಮಿ ಕಂಗೊಳಿಸುತ್ತಿರುವ ಈ ದಿನಗಳಲ್ಲಿ ಕೃಷಿಯಲ್ಲಿ ಭಾಗಿಯಾಗುವ ಎತ್ತುಗಳಿಗೆ ಗೌರವಿಸುವ ಮೂಲಕ ಈ ದಿನಗಳಲ್ಲಿ ಶ್ರಮ ಶ್ರಮ ಸಂಸ್ಕೃತಿಯನ್ನು ಗೌರವಿಸುವ ಕಾರ್ಯ ಶತಮಾನಗಳಿಂದ ನಡೆದುಕೊಂಡು ಬಂದಿದೆ .

ಹಳ್ಳಿಗಳಲ್ಲಿ ಕುಂಬಾರರು ತಯಾರಿಸಿದ ಸುಂದರವಾದ ಎತ್ತುಗಳನ್ನು ಕೊಂಡು ತಂದು ಅವುಗಳಿಗೆ ಪೂಜೆ ಸಲ್ಲಿಸಿ ಸಂಭ್ರಮಿಸಿ ಸಂತೋಷಪಡುವರು. ರೈತರು ಹಿಂದೆ ಎತ್ತುಗಳನ್ನು ಕೊಟ್ಟು ಅದರ ಬದಲಾಗಿ ದವಸ ಧಾನ್ಯಗಳನ್ನು ಪಡೆಯುತ್ತಿದ್ದರು. ಇಂದು ನಗರೀಕರಣದ ಪರಿಣಾಮ ಎತ್ತುಗಳು ಮಾರಾಟದ ಸರಕಾಗಿ ಪರಿಣಮಿಸಿವೆ. ಆದರೂ ಇನ್ನೂ ಹಳ್ಳಿಗಳಲ್ಲಿ ಎತ್ತುಗಳನ್ನು ಪೂಜ್ಯನೀಯ ಸ್ಥಾನದಲ್ಲಿ ಇಟ್ಟು ಗೌರವಿಸುತ್ತಾರೆ. ಮಣ್ಣೆತ್ತಿನ ಅಮಾವಾಸ್ಯೆ ವಿಶೇಷವಾಗಿ ಮಕ್ಕಳಿಗೆ ಸಂಭ್ರಮದ ಹಬ್ಬ. ಹಬ್ಬದ ಮರುದಿನ ಮಕ್ಕಳು ಮನೆ ಮನೆಗೆ ತೆರಳಿ ಕುಂಟೆತ್ತು ಬಂದಿದೆ ಅಂತ ಹೇಳಿ ಅಕ್ಕಿ, ಜೋಳ, ಕಾಳು, ಬೆಲ್ಲ ತಂದು ಅವುಗಳಿಂದ ಸಿಹಿ ಅಡಿಗೆ ಮಾಡಿಕೊಂಡು ಎಲ್ಲ ಮಕ್ಕಳು ಊಟ ಮಾಡಿ ಎತ್ತುಗಳಿಗೆ ಮತ್ತೊಮ್ಮೆ ಪೂಜೆ ಸಲ್ಲಿಸಿ ಅವುಗಳನ್ನು ವಿಸರ್ಜಿಸುವ ಪದ್ಧತಿ ರೂಢಿ ಇದೆ. ಮಕ್ಕಳೆಲ್ಲ ಸಂಭ್ರಮದಿಂದ ಈ ಕಾರ್ಯದಲ್ಲಿ ಭಾಗವಹಿಸಿ ಮಣ್ಣೆತ್ತಿನ ಅಮಾವಾಸ್ಯೆ ಯನ್ನು ಜೀವಂತವಾಗಿಸುವ ಕಾರ್ಯವನ್ನು ಈಗಲೂ ಮಾಡುತ್ತಿದ್ದಾರೆ .

ಈಗೀಗ ಕೃಷಿ ಚಟುವಟಿಕೆಗಳಿಗೆ ಹೆಚ್ಚಾಗಿ ಯಂತ್ರಗಳನ್ನು ಹಾಗೂ ಟ್ರ್ಯಾಕ್ಟರ್ ಗಳನ್ನು ಬಳಸುತ್ತಿರುವ ಕಾರಣದಿಂದ ಎತ್ತುಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ರೈತರ ಒಡನಾಡಿಯಾದ ಎತ್ತುಗಳು ಇಂದು ಪ್ರತಿಷ್ಠೆಯ ಪ್ರತೀಕವಾಗಿ ಇನ್ನೂ ಕುಟುಂಬದ ಕೆಲವರು ಲಕ್ಷ ಲಕ್ಷ ಹಣ ಕೊಟ್ಟು ಖರೀದಿಸಿ ಮನೆಗೆ ತಂದು ಎತ್ತುಗಳನ್ನು ಸಾಕುತ್ತಿದ್ದಾರೆ. ಎತ್ತುಗಳು ನಮ್ಮ ಅನ್ನದಾತರ ಗೌರವ ಪ್ರತೀಕ .ನಾವೆಲ್ಲರೂ ಕುಳಿತು ಊಟ ಮಾಡುವ ಪ್ರತಿಯೊಂದು ಅನ್ನದ ಅಗಳಿನ ಹಿಂದೆ ಕೋಟಿಗಟ್ಟಲೆ ರೈತರ ಶ್ರಮ ಇದೆ .ಆ ಶ್ರಮದ ಹಿಂದೆ ಎತ್ತುಗಳ ಒಡೆಯನಾದ ರೈತನ ಮೇಲಿನ ಪ್ರೀತಿ ಇದೆ .(ಬರಹ-ಶಂಕರ ದೇವರು ಹಿರೇಮಠ, ಸಾಹಿತಿಗಳು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending