ದಿನದ ಸುದ್ದಿ
‘ಪ್ರಧಾನಿ ಮೋದಿ ಹೇಳಿದ ಸುಳ್ಳುಗಳ’ ಪಟ್ಟಿ ನೀಡಿದ ಸಿಎಂ ಸಿದ್ದರಾಮಯ್ಯ ; ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್

ಸುದ್ದಿದಿನ ಡೆಸ್ಕ್ : ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಸುಮ್ಮನೆ ಲೆಕ್ಕ ಹಾಕತೊಡಗಿದೆ. ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ. ಈ ಸುಳ್ಳುಗಳ ಸರಮಾಲೆ ಇಲ್ಲಿಗೆ ನಿಲ್ಲಲಾರದು, ಮುಂದುವರಿಯಲಿದೆ.
ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವ ಪ್ರಧಾನಮಂತ್ರಿಯೂ ಇಷ್ಟೊಂದು ನಿರ್ಲಜ್ಜವಾಗಿ ಈ ರೀತಿ ಹಸಿಹಸಿ ಸುಳ್ಳುಗಳನ್ನು ಹೇಳಿರಲಾರರು. ಯಾರೂ ಕೂಡಾ ಪ್ರಧಾನಮಂತ್ರಿ ಕುರ್ಚಿಯ ಘನತೆಯನ್ನು ಈ ರೀತಿ ಮಣ್ಣು ಪಾಲು ಮಾಡಿರಲಾರರು.
ಮತದಾನದ ದಿನ ದೇಶದ ಜನರಿಗೆ ಸತ್ಯ-ಸುಳ್ಳುಗಳನ್ನು ಅರಿತುಕೊಳ್ಳುವ ಸದ್ಬುದ್ದಿಯನ್ನು ದೇವರು ಕರುಣಿಸಲಿ ಎಂದು ಬೇಡಿಕೊಳ್ಳುವೆ ಎಂದಿದ್ದಾರೆ.
ನರೇಂದ್ರ ಮೋದಿಯವರು ಹೇಳಿದ ಸುಳ್ಳುಗಳು…
- ಎಸ್ಸಿ/ಎಸ್ಟಿ, ಒಬಿಸಿ ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ.
- ಸಂಪತ್ತಿನ ಸಮಾನ ಹಂಚಿಕೆಯ ನೆಪದಲ್ಲಿ ಕಾಂಗ್ರೆಸ್ ಪಕ್ಷ ಹಿಂದೂಗಳ ಆಸ್ತಿಯನ್ನು ಕಬಳಿಸಿ ಮುಸ್ಲಿಮರಿಗೆ ನೀಡಲಿದೆ.
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಸೇರಿದಂತೆ ಜನರ ಚಿನ್ನ, ಆಸ್ತಿಯನ್ನು ಕಿತ್ತುಕೊಂಡು ಹೆಚ್ಚು ಮಕ್ಕಳು ಇರುವವರಿಗೆ, ನುಸುಳುಕೋರರಿಗೆ (ಮುಸ್ಲಿಮರಿಗೆ) ನೀಡಲಿದೆ.
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಬಗ್ಗೆ ಸುಪ್ರಿಂ ಕೋರ್ಟ್ ನೀಡಿದ ತೀರ್ಪನ್ನು ಬದಲಾಯಿಸುತ್ತದೆ.
- ದೇಶದ ಸಂಪತ್ತಿನ ಮೊದಲ ಹಕ್ಕು ಮುಸ್ಲಿಮರಿಗೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು.
- ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಗೆ ಶೇ.55ರಷ್ಟು ತೆರಿಗೆ ಹೇರಲಿದೆ.
- ಛತ್ರಪತಿ ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚೆನ್ನಮ್ಮ, ಮೈಸೂರಿನ ದೊರೆಗಳನ್ನು ಕಾಂಗ್ರೆಸ್ನವರು ನಿಂದಿಸುತ್ತಾರೆ.
- ಲೋಕಸಭಾ ಚುನಾವಣೆಯನ್ನು ವಿದೇಶಿ ಶಕ್ತಿಗಳು ನಿಯಂತ್ರಿಸುತ್ತಿದೆ.
- ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಉಗ್ರರಿಗೆ ಪ್ರಧಾನಮಂತ್ರಿಯವರ ನಿವಾಸದಲ್ಲಿ ಸ್ವಾಗತ ಕೋರಲಾಗಿತ್ತು.
- 2008ರಲ್ಲಿ ಮುಂಬೈ ಪ್ರವೇಶಿಸಿದ ಹತ್ತು ಉಗ್ರರ ಜೊತೆಗೆ ಕಾಂಗ್ರೆಸ್ ಸಂಪರ್ಕ ಹೊಂದಿತ್ತು
- ರಾಜ, ಮಹಾರಾಜರನ್ನು ಟೀಕಿಸುವ ಕಾಂಗ್ರೆಸ್ ನವಾಬರನ್ನು ಟೀಕಿಸುವುದಿಲ್ಲ.
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮೆಲ್ಲರ ಮನೆ ಮನೆಗೂ ದಾಳಿ ನಡೆಸಿ ನೀವು ಕೂಡಿಟ್ಟ ಸಂಪತ್ತನ್ನು ವಶಪಡಿಸಿ, ಅದನ್ನು ತನ್ನ ವೋಟ್ ಬ್ಯಾಂಕ್ಗೆ (ಮುಸ್ಲಿಮರಿಗೆ) ಮರು ಹಂಚಿಕೆ ಮಾಡುತ್ತದೆ.
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಬೀಗ ಹಾಕುತ್ತದೆ.
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತದ ಕ್ರಿಕೆಟ್ ತಂಡದಲ್ಲಿ ಬರೀ ಮುಸ್ಲಿಮರೇ ಇರುತ್ತಾರೆ.
- ಕಳೆದ ಐದು ವರ್ಷಗಳಿಂದ ಅದಾನಿ-ಅಂಬಾನಿಗಳನ್ನು ಪ್ರಶ್ನೆ ಮಾಡುತ್ತಿದ್ದ ರಾಹುಲ್ ಗಾಂಧಿ ಏಕಾಏಕಿ ಪ್ರಶ್ನೆ ಮಾಡುವುದನ್ನು ನಿಲ್ಲಿಸಿದ್ದೇಕೆ? ಹಣ ತುಂಬಿದ ಟೆಂಪೋಗಳು ಕಾಂಗ್ರೆಸ್ ಮನೆಗೆ ತಲುಪಿದೆ.
ಸುಳ್ಳುಗಳು ಮುಂದುವರಿಯಲಿದೆ… ಎಂದು ಮತ್ತೆ ವ್ಯಂಗ್ಯವಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಭ್ರಷ್ಟಾಚಾರದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು.!

ಸುದ್ದಿದಿನ,ದಾವಣಗೆರೆ:ಸಮಾನತೆ ಪಡೆದ ಮಹಿಳೆಯರು ಸದ್ಯ ಎಲ್ಲ ರಂಗಗಲ್ಲೂ ಪುರುಷರಿಗೆ ಸಮಾನವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ರ್ದುದೈವದ ಸಂಗತಿ ಎಂದರೆ ಪುರಷರನ್ನು ಮೀರಿ ಮಹಿಳಾ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಉಪಲೊಕಾಯಕ್ತನಾಗಿ ನಿಯುಕ್ತಿಯಾದ ಮೇಲೆ ಮಹಿಳಾ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವ ಸಾಕಷ್ಟು ಪ್ರಕರಣಗಳು ನನ್ನ ಗಮನಕ್ಕೆ ಬಂದಿವೆ. ಇದು ಉತ್ತಮ ಬೆಳವಣಿಗೆಯಲ್ಲ ಎಂದು ನೋವಿನಿಂದ ನ್ಯಾ.ಬಿ.ವೀರಪ್ಪ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ, ಗುರುವಾರ ಕರ್ನಾಟಕ ಲೋಕಾಯುಕ್ತ ವತಿಯಿಂದ ಆಯೋಜಿಸಲಾದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಪ್ರಕರಣಗಳ ವಿಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ವೇಲಾ.ಡಿ.ಕೆ. ಮಾತನಾಡಿ, ಲೋಕಾಯುಕ್ತದಲ್ಲಿ ಅಪರ ನಿಬಂಧಕರಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಸಾಕಷ್ಟು ಪ್ರಕರಣಗಳಲ್ಲಿ ಅಧಿಕಾರಿಗಳು ಕೆಳ ಹಂತದ ಸಿಬ್ಬಂದಿ ನೀಡುವ ವರದಿಗಳಿಗೆ ಕಣ್ಣು ಮುಚ್ಚಿ ಸಹಿ ಮಾಡುತ್ತಾರೆ. ಒಂದು ಕುಟುಂಬಕ್ಕೆ ವಿವಿಧ ರೀತಿಯಲ್ಲಿ ಜೀವಂತ ಸದಸ್ಯರ ಪ್ರಮಾಣ ಪತ್ರ, ವಂಶವೃಕ್ಷದಂತಹ ಪ್ರಮಾಣ ಪತ್ರಗಳ ನೀಡಿರುವುದು ಸಹ ವಿಚಾರಣೆ ವೇಳೆ ಕಂಡುಬಂದಿದೆ. ಇಂತಹ ಪ್ರಮಾಣ ಪತ್ರಗಳ ದುರಪಯೋಗದಿಂದ ಅನರ್ಹರು ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಾರೆ. ಅಧಿಕಾರಿಗಳು ಪ್ರಮಾಣ ಪತ್ರಗಳನ್ನು ನೀಡುವಾಗ ಪರಿಶೀಲನೆ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ನೆರವೇರಿಸಿ, ಪ್ರಾಸ್ತಾವಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್, ಭ್ರಷ್ಟಾಚಾರ ಸೂಚ್ಯಂಕದಲ್ಲಿ 180 ರಾಷ್ಟ್ರಗಳ ಪೈಕಿ ಭಾರತ 85ನೇ ಸ್ಥಾನದಲ್ಲಿದೆ. ರಾಜಕೀಯ ಇಚ್ಚಾಶಕ್ತಿ ಕೊರತೆ, ನೀತಿ ನಿರೂಪಣೆಯಲ್ಲಿ ದೋಷವಿರುವ ಕಾರಣ ಇಂದಿಗೂ ಸಣ್ಣ ಹಾಗೂ ಬೃಹತ್ ಪ್ರಮಾಣದಲ್ಲಿ ಭ್ರಷ್ಟಾಚಾರಗಳು ನಡೆಯುತ್ತಿವೆ. ಕೆಲಸಕ್ಕೆ ಸೇರುವಾಗ ಸಂವಿಧಾನ ಬದ್ದವಾಗಿ ಕರ್ತವ್ಯ ನಿರ್ವಹಿಸುವ ಪ್ರಮಾಣ ಸ್ವೀಕರಿಸಿರುತ್ತೇವೆ. ಇದನ್ನು ಗಮನದಲ್ಲಿ ಇರಿಸಿಕೊಂಡು ಸಾರ್ವಜನಿಕರಿಗೆ ಪಾರದರ್ಶಕ ಹಾಗೂ ತ್ವರಿತವಾಗಿ ಸೇವೆಗಳ ಲಭಿಸುವಂತೆ ಕೆಲಸ ನಿರ್ವಹಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತನಾಡಿ, ಬಹುತೇಕ ಅಧಿಕಾರಿ ಹಾಗೂ ಸಿಬ್ಬಂದಿ ಮಧ್ಯಮ ವರ್ಗ ಹಾಗೂ ಗ್ರಾಮೀಣ ಹಿನ್ನಲೆಯಿಂದ ಸರ್ಕಾರಿ ಕೆಲಸಕ್ಕೆ ಬಂದಿದ್ದೇವೆ. ಜನರು ನಮ್ಮಿಂದ ಉತ್ತಮ ಸೇವೆ ನಿರೀಕ್ಷಿಸುತ್ತಾರೆ. ತ್ವರಿತವಾಗಿ ಸ್ಪಂದಿಸಿ, ನಿಮ್ಮ ಹಂತದಲ್ಲಿಯೇ ಜನರ ಸಮಸ್ಯೆಗಳನ್ನು ಪರಿಹರಿಸುವುದು ಉತ್ತಮ. ಇದರ ಬದಲು ಸಾರ್ವಜನಿಕರು ಮೇಲಿನ ಹಂತಕ್ಕೆ ದೂರು ನೀಡಿ, ಮೇಲಿನವರಿಂದ ನಿರ್ದೇಶನ ಪಡೆದು ಕೆಲಸ ನಿರ್ವಹಿಸುಂತೆ ಆಗಬಾರದು. ಲೋಕಾಯುಕ್ತರ ಭೇಟಿಯನ್ನು ಧನಾತ್ಮಕವಾಗಿ ಸ್ವೀಕರಿಸಿ ಕೆಲಸ ಮಾಡುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಜರುಗಿದ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ನಾಗರಿಕರ ಗೌರವಾರ್ಥ ಒಂದು ನಿಮಿಷದ ಮೌನಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ್, ಅರವಿಂದ.ಎನ್.ವಿ., ಮಿಲನ.ವಿಎನ್., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ್, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಪೂರೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಧಿಕಾರಿಗಳ ಮೇಲೆ ಸುಳ್ಳು ಕೇಸು ದಾಖಲಿಸಿದರೆ 3 ವರ್ಷಗಳ ಜೈಲು ಶಿಕ್ಷೆ : ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ

ಸುದ್ದಿದಿನ,ದಾವಣಗೆರೆ:ಸ್ವಾರ್ಥಕ್ಕಾಗಿ ಕೆಲ ವ್ಯಕ್ತಿ ಹಾಗೂ ಸಂಘಟನೆಗಳು, ಅಧಿಕಾರಿಗಳ ಮೇಲೆ ಸುಳ್ಳು ಕೇಸು ದಾಖಲಿಸುತ್ತಿರುವುದು ಭ್ರಷ್ಟಾಚಾರ ಆರೋಪ ಪ್ರಕರಣಗಳ ವಿಚಾರಣೆ ವೇಳೆ ಲೋಕಾಯುಕ್ತ ಗಮನಕ್ಕೆ ಬರುತ್ತಿವೆ. ಲೋಕಾಯುಕ್ತ ಕಾಯ್ದೆ ಸೆಕ್ಷನ್ 20 ಅಡಿ ಅಧಿಕಾರಿಗಳ ಮೇಲೆ ಸುಳ್ಳು ಕೇಸು ದಾಖಲಿಸಿದರೆ 6 ತಿಂಗಳಿನಿಂದ 3 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ, ಗುರುವಾರ ಕರ್ನಾಟಕ ಲೋಕಾಯುಕ್ತ ವತಿಯಿಂದ ಆಯೋಜಿಸಲಾದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಪ್ರಕರಣಗಳ ವಿಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಅಧಿಕಾರಿಗಳು ಭಷ್ಟಾಚಾರದಲ್ಲಿ ತೊಡಗಿರುವ ಹಲವಾರು ಪ್ರಕರಣಗಳು ಸತ್ಯಾಂಶವೂ ಇದೆ. ಆದರೆ ಕೆಲ ವ್ಯಕ್ತಿಗಳು ಸ್ವಾರ್ಥಕ್ಕಾಗಿ ಅಧಿಕಾರಿಗಳ ಮೇಲೆ ಭ್ರಷ್ಟಾಚಾರದ ಆರೋಪ ಮಾಡುತ್ತಾರೆ. ಇದನ್ನು ಲೋಕಾಯುಕ್ತ ಸಹಿಸುವುದಿಲ್ಲ. ಅಧಿಕಾರಿಗಳನ್ನು ಬೆದರಿಸಲು ಮಾಹಿತಿ ಹಕ್ಕು ಹಾಗೂ ಲೋಕಾಯುಕ್ತ ಕಾಯ್ದೆಯ ದುರುಪಯೋಗ ಮಾಡಿಕೊಂಡ ಪ್ರಕರಣಗಳು ನಮ್ಮ ಮುಂದಿವೆ. ವೈಕ್ತಿಯೋರ್ವ 5 ಅಧಿಕಾರಿಗಳ ಮೇಲೆ ಸುಳ್ಳು ಆರೋಪ ಮಾಡಿರುವುದು ವಿಚಾರಣೆಯಲ್ಲಿ ಕಂಡುಬಂದಿತ್ತು. ಪ್ರಕರಣದ ತೀರ್ಪಿನಲ್ಲಿ ವ್ಯಕ್ತಿಗೆ ಕಠಿಣ ಎಚ್ಚರಿಕೆ ನೀಡಿ, ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳದಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ನ್ಯಾ.ಬಿ.ವೀರಪ್ಪ ತಿಳಿಸಿದರು.
ಭ್ರಷ್ಟರ ಸಂಹಾರಕ್ಕಾಗಿ ಲೋಕಾಯಕ್ತ
ಕರ್ನಾಟಕ ಲೋಕಾಯುಕ್ತ ಸ್ವಾಯತ್ತ ಸಂಸ್ಥೆಯಾಗಿದೆ. ರಾಜಕಾರಣಿಗಳು ಹಾಗೂ ಅಧಿಕಾರಿಗಳ ಮುಲಾಜಿಗೆ ಬಿದ್ದು ಕೆಲಸ ಮಾಡುತ್ತಿಲ್ಲ. ಭ್ರಷ್ಟರ ಸಂಹಾರಕ್ಕಾಗಿ ಲೋಕಾಯಕ್ತ ಸಂಸ್ಥೆ ಅವಿರತ ಪ್ರಯತ್ನ ಮಾಡುತ್ತಿದೆ. ಉಪಲೋಕಾಯುಕ್ತನಾಗಿ ನಿಯುಕ್ತಿಯಾದ ಮೇಲೆ ನನ್ನ ಸಂಪೂರ್ಣ ಆಸ್ತಿ ವಿವರವನ್ನು ಸಾರ್ವಜನಿಕವಾಗಿ ಘೋಷಿಸಿಕೊಂಡಿದ್ದೇನೆ. ಎಲ್ಲರೂ ತಮ್ಮ ಆಸ್ತಿ ವಿವರವನ್ನು ಪ್ರಕಟಿಸಬೇಕು. ಅಧಿಕಾರಿಗಳನ್ನು ಬೆಂಗಳೂರಿನ ಲೋಕಾಯಕ್ತ ಕಚೇರಿ ಕರೆಯಿಸಿ ವಿಚಾರಣೆ ನಡೆಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಈ ಹಿನ್ನಲೆಯಲ್ಲಿ ಇಬ್ಬರು ಉಪಲೋಕಾಯುಕ್ತರು ಸೇರಿ ಎಲ್ಲಾ ಜಿಲ್ಲೆಗಳನ್ನು ಹಂಚಿಕೊಂಡು, ಪ್ರತಿ ಜಿಲ್ಲೆಗೆ 3 ದಿನಗಳ ಪ್ರವಾಸ ಕೈಗೊಂಡು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆ ನಡೆಸಿ, ವಿಲೆ ಮಾಡಲು ಕ್ರಮ ವಹಿಸಲಾಗಿದೆ ಎಂದು ನ್ಯಾ.ಬಿ.ವೀರಪ್ಪ ಹೇಳಿದರು.
ಆತಿಥ್ಯ ಸ್ವೀಕರಿಸಲು ಜಿಲ್ಲೆಗೆ ಆಗಮಿಸಿಲ್ಲ
ಬೆಂಗಳೂರಿನಿಂದ ಲೋಕಾಯುಕ್ತ ಅಧಿಕಾರಿಗಳ ತಂಡವನ್ನು ಕರೆದುಕೊಂಡು ಸ್ವಂತ ವಾಹನದಲ್ಲಿ ದಾವಣಗೆರೆ ಜಿಲ್ಲೆಗೆ ಆಗಮಿಸಿದ್ದೇನೆ. ಅಧಿಕಾರಿಗಳು ನೀಡುವ ಆತಿಥ್ಯ ಸ್ವೀಕರಿಸಲು ಜಿಲ್ಲೆಗೆ ಆಗಮಿಸಿಲ್ಲ. ಶಿಷ್ಟಾಚಾರದ ಅನುಸಾರ ಅಧಿಕಾರಿಗಳು ಭದ್ರತೆ ನೀಡಿದ್ದಾರೆ. ಲೋಕಾಯುಕ್ತದಲ್ಲಿ ಕೆಲಸ ಮಾಡುವ ನಮಗೆ ಜೀವ ಬೆದರಿಕೆಯೂ ಇದೆ. ನಗರದ ವಿವಿಧ ಕಚೇರಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿ, ಜಿ.ಪಂ.ಸಿಇಓ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಭದ್ರತಾ ಸಿಬ್ಬಂದಿ, ಹಿರಿಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಮ್ಮ ವಾಹನಗಳಲ್ಲಿ ಸಂಚರಿಸಿದ್ದಾರೆ.
64 ವರ್ಷದ ನಾನು ನಡೆದುಕೊಂಡು ಕಚೇರಿಗಳಿಗೆ ಭೇಟಿ ನೀಡುವುದು ಸಾಧ್ಯವಿಲ್ಲ. ಹಾಗಾಗಿ ವಾಹನ ಬಳಿಸಿ ಸಂಚರಿಸಿದ್ದೇನೆ. ಇದು ದುಂದುವೆಚ್ಚ ಆಡಂಬರದ ವಿಷಯವಲ್ಲ. ಯಾವುದೇ ಕಚೇರಿ ಭೇಟಿಯ ವೇಳೆ ಅಧಿಕಾರಿಗಳು ನೀಡುವ ನೀರನ್ನು ಸಹ ಕುಡಿಯದೇ, ಪರಿಶೀಲನೆ ನಡೆಸಿದ್ದೇನೆ. ಅಕ್ರಮಗಳನ್ನು ಕಂಡು ಬಂದಲ್ಲಿ ಮುಲಾಜು ಇಲ್ಲದೇ ಸ್ವಂ ಪ್ರೇರಿತ ಪ್ರಕರಣ ದಾಖಲಿಸಿದ್ದೇನೆ. ಸಾರ್ವಜನಿಕರಿಗೆ ಲೋಕಾಯುಕ್ತ ಸಂಸ್ಥೆಯ ಮೇಲಿನ ನಂಬಿಕೆ ಕಡಿಮೆಯಾಗದಂತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನ್ಯಾ.ಬಿ.ವೀರಪ್ಪ ಹೇಳಿದರು.
ಶೇ.90 ರಷ್ಟು ವಿದ್ಯಾವಂತರಿಗೆ ಕಾನೂನು ಅರಿವಿಲ್ಲ
ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಸಾಕ್ಷರತೆ ಶೇ.18 ರಷ್ಟಿತ್ತು. ಇಂದು ಸಾಕ್ಷರತೆ ಪ್ರಮಾಣ ಶೇ.80 ರಷ್ಟಿದೆ, ಆದರೆ ಸಾಕ್ಷರರಾದ ಶೇ.90 ರಷ್ಟು ವಿದ್ಯಾವಂತರಿಗೆ ಕಾನೂನುಗಳ ಅರಿವಿಲ್ಲ ಎಂದು ನ್ಯಾ.ಬಿ.ವೀರಪ್ಪ ಹೇಳಿದರು. ಹೆಚ್ಚಿನ ಪ್ರಕರಣ, ತಂಟೆ ತಕರಾರುಗಳು ವಿದ್ಯಾವಂತರಿಂದ ಆಗುತ್ತಿವೆ. ಡಾ.ಡಿ.ವಿ.ಗುಂಡಪ್ಪನವರು ಮಂಕುತಿಮ್ಮನ ಕಗ್ಗದಲ್ಲಿ ಹೇಳಿರುವಂತೆ ಮುಂದೊಂದು ದಿನ ಈ ದೇಶ ವಿದ್ಯಾವಂತ ಮೋಸಗಾರರಿಂದಲೇ ಅಧೋಗತಿ ತಲುಪುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೋವಿಡ್ ನಂತರ ಭ್ರಷ್ಟಾಚಾರ ಹೆಚ್ಚಳ
ಕೋವಿಡ್-19 ಬಂದ ಸಂದರ್ಭದಲ್ಲಿ ಇಡಿ ವಿಶ್ವವೇ ತಲ್ಲಿಣಿಸಿ ಹೋಗಿತ್ತು. ಜನರಿಗೆ ಜೀವ ಉಳಿಸಿಕೊಳ್ಳುವುದು ಮುಖ್ಯವಾಗಿತ್ತು. ದೇಶದಲ್ಲಿ ವಕೀಲರು,ಪೊಲೀಸರು, ವೈದ್ಯರು, ಸೇರಿದಂತೆ ಸಾವಿರಾರು ಜನರು ಕೋವಿಡ್ನಿಂದ ಮೃತ ಪಟ್ಟರು. ಕೋವಿಡ್ ವೈರಸ್ ಜನರಿಗೆ ನಿಜ ಬದುಕಿನ ಅನಾವರಣೆ ಮಾಡಿ, ಬುದ್ದಿ ಕಲಿಸಿದೆ, ಉತ್ತಮ ಮಾರ್ಗದಲ್ಲಿ ಜೀವಿಸಲು ಕಾರಣವಾಗಿದೆ ಎಂದು ಭಾವಿಸಿದ್ದಾಗಿ ನ್ಯಾ.ವಿ.ವೀರಪ್ಪ ಹೇಳಿದರು. ಆದರೆ, 2021ರ ನಂತರ ನಾಯಿ ಬಾಲ ಡೊಂಕು ಎಂಬಂತೆ ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಹೆಚ್ಚಳವಾಗಿದೆ ಎಂದು ಅವರು ಹೇಳಿದರು.
ಸ್ವಾರ್ಥಿ ಮನುಷ್ಯನಿಂದ ಪ್ರಕೃತಿ ನಾಶ
ಸ್ವಾರ್ಥಿಯಾದ ಮನುಷ್ಯನಿಂದ ನಿಸ್ವಾರ್ಥಿಯಾದ ಗಿಡಮರಗಳು, ಪ್ರಾಣಿ ಪಕ್ಷಿಗಳು ಸೇರಿದಂತೆ ಪ್ರಕೃತಿಯ ನಾಶವಾಗುತ್ತಿದೆ. ಇದರಿಂದ ಪ್ರಾಕೃತಿಕ ಅವಘಡಗಳು ಸಂಭವಿಸುತ್ತಿವೆ. ಪ್ರಾಣಿ ಹಾಗೂ ಮನುಷ್ಯ ನಡುವೆ ಸಂಘರ್ಷ ಹೆಚ್ಚಾಗಿದೆ. ಜಿಲ್ಲೆಯ ಗಣಿ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಪರವಾನಿಗೆ ಪಡೆದ ಪ್ರದೇಶಕ್ಕಿಂತ ಹೆಚ್ಚಿನ ಜಾಗದಲ್ಲಿ ಗಣಿಗಾರಿಕೆ ನಡೆಸಲಾಗಿದೆ. ಇದಕ್ಕೆ ಇಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಬಗ್ಗೆ ಸ್ವಯಂ ಪ್ರೇರಿತ ಲೋಕಾಯುಕ್ತ ದೂರು ದಾಖಲಿಸಿಕೊಳ್ಳುವುದಾಗಿ ನ್ಯಾ.ಬಿ.ವೀರಪ್ಪ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉಗ್ರರನ್ನು ಸದೆಬಡಿಯಲು ಕೇಂದ್ರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಪಹಲ್ಗಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ಭರತ್ ಭೂಷಣ್ ಅವರ ಪಾರ್ಥಿವ ಶರೀರವನ್ನು ಮತ್ತಿಕೆರೆಯ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.
ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್, ಕೇಂದ್ರ ಸಚಿವ ವಿ. ಸೋಮಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಮಧ್ಯಾಹ್ನದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾಗಿರುವ ಮಂಜುನಾಥ ರಾವ್ ಹಾಗೂ ಭರತ್ ಭೂಷಣ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದರು.
ಭಯೋತ್ಪಾದಕ ದಾಳಿಯಂತಹ ಹೀನ ಕೃತ್ಯದಲ್ಲಿ ಅಮಾಯಕ ಜೀವಗಳು ಬಲಿಯಾಗಿರುವುದು ಅತ್ಯಂತ ದುಃಖದ ವಿಚಾರ. ಈ ದಾಳಿಯಲ್ಲಿ ಮಡಿದ ಕನ್ನಡಿಗರ ಅಂತ್ಯಸಂಸ್ಕಾರವನ್ನು ಗೌರವದಿಂದ ನೆರವೇರಿಸಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯವೆಂದು ಭಾವಿಸಿ, ಈ ನಿರ್ಣಯ ತೆಗೆದುಕೊಂಡಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ರಾಜಕೀಯ7 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ
-
ದಿನದ ಸುದ್ದಿ6 days ago
ಇ-ಸ್ವತ್ತು ಸಮಸ್ಯೆ ಪರಿಹಾರಕ್ಕಾಗಿ ಕಾರ್ಯನಿರ್ವಹಣಾ ಸಮಿತಿ ರಚನೆ
-
ದಿನದ ಸುದ್ದಿ6 days ago
‘ವಿದ್ಯಾಸಿರಿ’ ಯೋಜನೆಯಡಿ ವಿದ್ಯಾರ್ಥಿ ವೇತನ ಪರಿಷ್ಕರಣೆಗೆ ಒತ್ತು : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ7 days ago
ದಾವಣಗೆರೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ದಾವಣಗೆರೆ | ಮೌಲಾನಾ ಅಜಾದ್ ಮಾದರಿ ಶಾಲೆಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ದಾವಣಗೆರೆ | ಮೊಬೈಲ್ ಕ್ಯಾಟೀನ್ ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಜೆಇಇ ಮೇನ್ಸ್ ಫಲಿತಾಂಶ ಪ್ರಕಟ : 24 ವಿದ್ಯಾರ್ಥಿಗಳಿಗೆ ನೂರಕ್ಕೆ ನೂರು ಅಂಕ