ದಿನದ ಸುದ್ದಿ
ಮೊಹರಂ : ಜನತೆಯ ಧರ್ಮ
- ಡಾ.ರಹಮತ್ ತರೀಕೆರೆ
ಏಳನೇ ಶತಮಾನದಲ್ಲಿ, ಮಹಮದ್ ಪೈಗಂಬರರ ಮೊಮ್ಮಕ್ಕಳಾದ ಹುಸೇನ್ ಹಾಗೂ ಅವರ ಸಂಗಡಿಗರು ಯಜೀದನೆಂಬುವವನ ವಿರುದ್ಧ, ಕರ್ಬಲಾ ಮೈದಾನದಲ್ಲಿ ಲಡಾಯಿ ಮಾಡುತ್ತ ಜೀವಬಿಟ್ಟರು. ಇದರ ಶೋಕಾಚರಣೆಯ ಭಾಗವಾಗಿ ಮೊಹರಂ ಆಚರಣೆ ಶುರುವಾಯಿತು.
ಕರ್ಬಲಾ ವೀರರ ಸಾವು ದಾರುಣ ಸಂಗತಿಯಾಗಲು ಕಾರಣ, ಅವರ ತಲೆಕಡಿದು ಮೆರವಣಿಗೆ ಮಾಡಲಾಯಿತು. ಜತೆಯಿದ್ದ ಎಳೆಗೂಸುಗಳು ಕುಡಿಯಲು ನೀರಿಲ್ಲದೆ ಪರಿತಪಿಸುತ್ತ ಸತ್ತರು. ಮಹಿಳೆಯರು ದುಃಖದಿಂದ ಪರಿತಪಿಸಿದರು. ಇದನ್ನು ಜನಪದರು ‘ಧರಮಕ ಸತ್ತವರಾ ಕೋಟಿಗೊಬ್ಬ ಜನರಾ, ಆರಾಣ್ಯಾದಾಗ ಅವರಾ ಕಾಣದ ಮೂರು ದಿವಸ ನೀರಾ, ಕುಡದಾರೋ ಕಣ್ಣೀರಾ ಮಕ್ಕಳು ಹುಡುಗರು ಹೆಂಗಸರಾ’ ಎಂದು ಹಾಡಿರುವುದುಂಟು. ಇಂತಹ ದುಗುಡದ ನೆನಪಿನಲ್ಲಿ ಹುಟ್ಟಿದ ಧಾರ್ಮಿಕ ಆಚರಣೆಯೊಂದು ಕರ್ನಾಟಕದಲ್ಲಿ ಸಾಂಸ್ಕೃತಿಕ ಆಚರಣೆಯಾಗಿ ರೂಪಾಂತರ ಪಡೆಯಿತು. ಉತ್ತರ ಕರ್ನಾಟದಲ್ಲಿ ಎಲ್ಲ ಧರ್ಮದ ಜಾತಿಯ ಜನರು ಒಟ್ಟಾಗಿ ಆಚರಿಸುವ ಊರಹಬ್ಬವಾಯಿತು. ಹೀಗಾಗಿ ಮುಸ್ಲಿಮರೇ ಇಲ್ಲದ ನೂರಾರು ಊರುಗಳಲ್ಲೂ ಮೊಹರಂ ನಡೆಯುತ್ತದೆ.
ಮೊಹರಂನಲ್ಲಿ ಶೋಕಗೀತೆಯ ರಚನೆ, ಹಾಡಿಕೆ, ಕುಣಿತ, ವೇಷಗಾರಿಕೆ,ಮೆರವಣಿಗೆ, ವಿಶೇಷ ಆಹಾರಗಳ ಆಯಾಮಗಳಿವೆ. ಇದರ ಫಲವಾಗಿ ಕರ್ನಾಟಕದಲ್ಲಿ ಹಾಡು ಕಟ್ಟುವ ಸಾವಿರಾರು ಶಾಹಿರರೂ ಗಾಯಕರೂ ಇದ್ದಾರೆ. ಹೆಜ್ಜೆಕುಣಿತ, ಕೋಡಂಗಿ ಕುಣಿತ, ಡಬಗಳ್ಳಿ ಕುಣಿತ ಮಾಡುವ, ಹುಲಿವೇಷ, ಅಚೊಳ್ಳಿಸೋಗು, ಭಡಂಗ್ವೇಷ ಹಾಕುವ ಹರಕೆ ಕಲಾವಿದರಿದ್ದಾರೆ. ನಾನು ಕಂಡಂತೆ,
ಬೀಳಗಿ, ಕೆರೂರ ಕುದುರೆಮೋತಿ ಅಗಸನೂರ , ಆಯನೂರು ಯರಗುಪ್ಪಿ ಗೋಕಾಕಫಾಲ್ಸ ಮುದಗಲ್ ಮೊಹರಂ ವಿಶಿಷ್ಟವಾದವು. ಪ್ರತಿಯೊಂದೂ ಊರು ತನ್ನದೇ ಆಚರಣೆಯನ್ನು ರೂಢಿಸಿಕೊಂಡಿದೆ.
ಅಗಸನೂರಿನಲ್ಲಿ ಹತ್ತು ದಿನಗಳ ಕಾಲ ಚಪ್ಪಲಿ ತೊಡುವುದಿಲ್ಲ. ಮಂಚದಲ್ಲಿ ಮಲಗುವುದಿಲ್ಲ. ಬೀಳಗಿಯಲ್ಲಿ ತೇರಿನಂಥ ರಚನೆಗೆ ಹಿಲಾಲುಗಳನ್ನು ಸಿಕ್ಕಿಸಿ ಉರಿವವೃಕ್ಷವನ್ನೇ ಸೃಷ್ಟಿಸುತ್ತಾರೆ. ಆಯನೂರಲ್ಲಿ ಯಜೀದನ ಸಂಕೇತವಾಗಿ ರಾವಣನ ಪ್ರತಿಕೃತಿ ಸುಡುತ್ತಾರೆ; ಅಗಸನೂರಿ ನಲ್ಲಿ ಅಲಾವಿಯ ಸುತ್ತ ಮಾಡುವ ಹೆಜ್ಜೆ ನೃತ್ಯವು ಅಪೂರ್ವವಾಗಿದೆ. ಕುದುರೆಮೋತಿ, ಹೊಸಪೇಟೆ, ಗಜೇಂದ್ರಗಡಗಳು ಹುಲಿವೇಷಕ್ಕೆ ಹೆಸರಾಗಿವೆ; ಮುದಗಲ್ಲಿನಲ್ಲಿ ಅಗಲಿದ ಹಸನ- ಹುಸೇನರ ಮಿಲನವಾ ಗುವ ಆಚರಣೆ ಕಣ್ತುಂಬಿಕೊಳ್ಳಲು ಕೋಟೆಯ ಹೊರಗೆ ಸಾವಿರಾರು ಜನ ಸೇರುತ್ತಾರೆ. ಇಂಡಿ ಕಡೆ ಭಡಂಗ್ ಎನ್ನುವ ಹರಕೆವೇಷ ಹಾಕುತ್ತಾರೆ; ಬಾಗಲಕೋಟೆ-ವಿಜಯಪುರ ಸೀಮೆಯಲ್ಲಿ ಆಫ್ರಿಕನ್ ಸಿದ್ದಿಗಳನ್ನು ನೆನಪಿಸುವ ಅಚೊಳ್ಳಿ- ಬಿಚೊಳ್ಳಿ ಸೋಗುಗಳಿವೆ.
ಈ ಸೋಗಿಗೆ ಮುಖಕ್ಕೆ ಕಪ್ಪುಮಸಿ ಬಳಿದು, ಸೊಂಟಕ್ಕೆ ಗಂಟೆ ಕಟ್ಟಿ, ತಲೆಗೆ ಲಾಲಿಕೆಯಾಕಾರದ ಅಲಂಕೃತ ಟೋಪಿ ಧರಿಸುತ್ತಾರೆ. ಮೊಹರಂ ಆಚರಣೆಯ ದಿನಗಳಲ್ಲಿ ಮುಸ್ಲಿಮೇತರರು ಲಾಡಿ ಧರಿಸಿ ಫಕೀರರಾಗುವ ಪದ್ಧತಿಯೂ ಇದೆ. ಮುಸ್ಲಿಮೇತರ ಕುಟುಂಬಗಳು ಐದು ಜನ ಫಕೀರರಿಗೆ ಕರೆದು ಬಿನ್ನಹ ಮಾಡಿಸಿದಲ್ಲದೆ ತಾವು ಉಣ್ಣುವುದಿಲ್ಲ. ಚೋಂಗೆ, ಮಾಲ್ದಿ ಎಂಬ ಸಿಹಿ ಅಡುಗೆ, ಶರಬತ್ತು ಹಾಗೂ ಮೊಸರನ್ನ ಮೊಹರಂ ಮುಖ್ಯ ಅಡುಗೆಗಳು. ಕರ್ಬಲಾ ವೀರರು ಊಟ ನೀರಿಲ್ಲದೆ ಮಡಿದವರಾದ್ದರಿಂದ, ಹಸಿದವರಿಗೆ ಉಣಿಸುವ ಮತ್ತು ಬಾಯಾರಿದವರಿಗೆ ಶರಬತ್ತು ಕುಡಿಸುವ ಪದ್ಧತಿ ರೂಢಿಯಲ್ಲಿದೆ. ಇಂಡಿ ಮತ್ತು ಸೇಡಂ ಭಾಗದಲ್ಲಿ ಕುರಿಬ್ಯಾಟೆ ಕೊಡುವ ಪದ್ಧತಿಯಿದೆ. ಹೀಗೆ ಉತ್ತರ ಕರ್ನಾಟಕದ ಮೊಹರಂ ಬಹುರೂಪಿಯಾಗಿದೆ.
ದೂರದ ಇರಾಕಿನಲ್ಲಿ ಸಾವಿರಾರು ವರ್ಷದ ಹಿಂದೆ ನಡೆದ ಒಂದು ಮಾನವ ದುರಂತವನ್ನು, ತಮ್ಮ ಬೀದಿಯಲ್ಲಿ ನಿನ್ನೆ ಮೊನ್ನೆ ಸಂಭವಿಸಿದ್ದು ಎಂದು ಇನ್ನೊಂದು ದೇಶಕ್ಕೆ, ಕಾಲಕ್ಕೆ ಸಂಸ್ಕೃತಿ ಮತ್ತು ಧರ್ಮಕ್ಕೆ ಸೇರಿದ ಜನಸಮುದಾಯ ಭಾವಿಸಿ ಮಿಡಿಯುವುದೇ ಸೋಜಿಗ. ಇದು ಜನಪದ ಮನಸ್ಸಿನ ಮಾನವೀಯ ಗುಣ. ಇಲ್ಲಿ ಚರಿತ್ರೆಯನ್ನು ಸಮಕಾಲೀನಗೊಳಿಸುವ ಗುಣವೂ ಇದೆ. ವಿಶೇಷವೆಂದರೆ, ಕರ್ಬಲಾ ಹಾಡುಗಳಿಗೆ ದುರಂತದ ವಸ್ತುವಿಗೆ ಸ್ಥಳೀಯ ದುರಂತ ಘಟನೆಗಳೂ ಸೇರಿಕೊಳ್ಳುವುದು. ಬಸ್ಸು ಕಾಲುವೆಗೆ ಉರುಳಿ ಜನ ಸತ್ತದ್ದು, ಎತ್ತುಗಳನ್ನು ರಕ್ಷಣೆ ಮಾಡುತ್ತ ರೈತ ಕಳ್ಳರ ಕೈಲಿ ಕೊಲೆಯಾಗಿದ್ದು, ದುಷ್ಟನಿಂದ ತನ್ನನ್ನು ಕಾಪಾಡಿಕೊಳ್ಳುವ ಅವಸರದಲ್ಲಿ ತಾಯೊಬ್ಬಳು ಕೂಸನ್ನು ಕಳೆದುಕೊಂಡಿದ್ದು, ಗೆಳೆಯನ ಮಡದಿಯನ್ನು ಪ್ರೇಮಿಸಿ ಸ್ವಹತ್ಯೆ ಮಾಡಿಕೊಂಡಿದ್ದು – ಇವೂ ಮೊಹರಂ ಹಾಡುಗಳ ವಸ್ತುಗಳಾಗಿವೆ. ಬೀಳಗಿ ತಾಲ್ಲೂಕಿನ ರೊಳ್ಳಿಯಲ್ಲಿ ಆಲಮಟ್ಟಿ ಡ್ಯಾಂನ ನೀರಿನಲ್ಲಿ ಊರು ಮನೆ ಜಮೀನು ಮುಳುಗಡೆಯಾದ ದುಃಖವನ್ನು ಕೇಳುವವರ ಎದೆಕಲಕುವಂತೆ ಹಾಡಾಗಿ ಹಾಡಿದ್ದರು.
ಮೊಹರಂ ಹಾಡುಪರಂಪರೆ, ಭಾರತೀಯ ಗುರುಪರಂಪರೆಯ ಭಾಗವಾಗಿದೆ. ಶಾಸ್ತ್ರೀಯ ಸಂಗೀತದಲ್ಲಿ ಇರುವಂತೆ, ಇಲ್ಲೂ ಹಾಡಿಕೆ ಕಲಿಯುವ ಶಿಷ್ಯರು ಗುರುವಿನಿಂದ ದೀಕ್ಷೆ ಪಡೆದು ಜತೆಯಲ್ಲಿ ಹಾಡುತ್ತ, ಒಂದು ದಿನ ಗುರುವಿನ ಅನುಮತಿಯಿಂದ ಸ್ವತಂತ್ರವಾಗಿ ಹಾಡುತ್ತಾರೆ; ಹಾಡಿನಲ್ಲಿ ಗುರುವಿನ ಹೆಸರನ್ನು ಸ್ಮರಿಸುತ್ತಾರೆ; ಬೇರೆ ಬೇರೆ ತಂಡಗಳು ಪರಸ್ಪರ ಎದುರಾಗಿ, ಜಿದ್ದಾಜಿದ್ದಿ ಸವಾಲ್- ಜವಾಬ್ ನಡೆಸುತ್ತಾರೆ.
ನರಗುಂದ ತಾಲ್ಲೂಕಿನ ಕೊಣ್ಣೂರಿನಲ್ಲಿ ಸವಾಲ್ ಜವಾಬ್ ಹಾಡಿಕೆಯ ಸ್ಪರ್ಧೆ ನಡೆಯುತ್ತದೆ. ಅದೊಂದು ಬೌದ್ಧಿಕ ಕದನ. ಇದರಲ್ಲಿ ಸೋತವರು ಸಾಯುವ ತನಕ ಹಾಡಿಕೆಗೆ ವಿದಾಯ ಹೇಳಿದ್ದುಂಟು; ಗೆದ್ದವರು ಪದಕ ಧರಿಸಿ, ಜನರಿಂದ ಆಹೇರಿ ಪಡೆದು, ಹೊಲವನ್ನು ಭಕ್ಷೀಸಾಗಿ ಪಡೆದದ್ದುಂಟು. ವೆಂಕಟಬೇನೂರಿನ (ಕಲಬುರ್ಗಿ) ಕಾಕಿಪೀರಾ, ಕದರಮಂಡಲಗಿಯ (ಬ್ಯಾಡಗಿ) ಅಲ್ಲಾಭಕ್ಷ್, ಹುಲಕುಂದದ (ರಾಮದುರ್ಗ) ಭೀಮಕವಿ, ನಿಡಗುಂದದ (ಚಿಂಚೋಳಿ) ಕೆರೂರ ನದಾಫಸಾಬ್ (ಬದಾಮಿ)ಬಸವಂತರಾವ್, ಗೋಕಾಕದ ಭರಮಣ್ಣ ಬೂಶಿ, ಸತ್ತೂರಿನ ಇಮಾಂಸಾಬ್ ಪ್ರಸಿದ್ಧ ಶಾಹಿರರು. ಇಂಡಿ, ಸೇಡಂ, ಬೀಳಗಿ ಭಾಗದಲ್ಲಿ ಮಹಿಳೆಯರು ಗುಂಪಾಗಿ ಕುಳಿತು ಶೋಕಗೀತೆಗಳನ್ನು ಹಾಡುತ್ತಾರೆ. ಈ ಗೀತೆಗಳ ವಸ್ತು, ಅಸಘರನೆಂಬ ಕೂಸಿನ ಸಾವು, ಅಭಿಮನ್ಯುವಿನ ಹಾಗೆ ಚಿಕ್ಕ ಹುಡುಗನಾದ ಕಾಸೀಮ್ನನ್ನು ರಣರಂಗಕ್ಕೆ ಕಳಿಸಿಕೊಡುವುದು, ಕಾಸೀಮನ ಮರಣ, ಅವನ ಎಳೆಹೆಂಡತಿ ಸಕೀನಾಳನ್ನು ವಿಧವೆಯಾಗಿಸುವುದು, ಅವಳ ಪ್ರಲಾಪ ಇತ್ಯಾದಿ.
ಮೊಹರಂ ಹಾಡುಗಾರರು ಇಸ್ಲಾಮಿನ ಚರಿತ್ರೆ ಪುರಾಣಗಳಂತೆ, ಮಹಾಭಾರತ, ರಾಮಾಯಣ, ಶಿವಪುರಾಣಗಳಲ್ಲಿಯೂ ಪರಿಣತಿ ಪಡೆದಿದ್ದಾರೆ. ಅವರ ಹಾಡುಗಳಲ್ಲಿ ಯಜೀದ್- ಹುಸೇನರ ಕದನದ ಚರಿತ್ರೆಯು ದೇಸಿ ಪುರಾಣಗಳ ಜತೆ ಬೆರೆತುಬಿಡುತ್ತದೆ. ಬಾಗೇವಾಡಿ ತಾಲ್ಲೂಕಿನಲ್ಲಿ ಪೈಗಂಬರನ್ನು ರಾಮನನ್ನಾಗಿ, ಬೀಬೀ ಫಾತಿಮಾರನ್ನು ಸೀತೆಯನ್ನಾಗಿ, ಹಸನ-ಹುಸೇನರನ್ನು ಲವ-ಕುಶರನ್ನಾಗಿ ಸಮೀಕರಿಸಿ ಹಾಡುತ್ತಾರೆ. ಈ ಹಾಡುಗಳಲ್ಲಿ ಪೈಗಂಬರರನ್ನು ಶರಣ ಎಂದೇ ಕರೆಯಲಾಗಿದೆ. ಬಸವಣ್ಣ, ಮಹದೇವ ಹಾಗೂ ಪೈಗಂಬರ್ ಒಟ್ಟಿಗೇ ಇರುವ ಮಂತ್ರವನ್ನು ಅನೇಕ ಮೊಹರಂ ಮಸೀದಿಯ ತಲೆಬಾಗಿಲಲ್ಲಿ ಕೆತ್ತಲಾಗಿದೆ. ಇಲ್ಲಿರುವ ತತ್ವವೆಂದರೆ, ಲೋಕಹಿತ ಬಯಸುವ ಲೋಕದ ಸಮಸ್ತ ದಾರ್ಶನಿಕರೂ ದೈವಗಳೂ ಮೂಲತಃ ಒಂದೇ ಎಂಬುದು.
ಕರ್ನಾಟಕ ಸಂಸ್ಕೃತಿಯ ವೈಶಿಷ್ಟ್ಯವೆಂದರೆ ಬಹುತ್ವ ಪ್ರಜ್ಞೆ. ಈ ಪ್ರಜ್ಞೆಯು ಪುರಾಣ ಮತ್ತು ಇತಿಹಾಸವನ್ನು ಬೆರೆಸುತ್ತದೆ; ಬೇರೆ ಬೇರೆ ಮತಧರ್ಮದ ಕಥನಗಳಲ್ಲಿರುವ ಸಮಾನ ಅಂಶಗಳನ್ನು ಒಂದೆಡೆ ಜೋಡಿಸುತ್ತದೆ. ಇದು ಭಾರತದ ನಿಜವಾದ ಸಾಂಸ್ಕೃತಿಕ ಪ್ರತಿಭೆ. ಮಧ್ಯಕಾಲೀನ ದೊರೆಗಳು ರಾಜ್ಯವಿಸ್ತರಣೆಗಾಗಿ ಮಾಡಿದ ರಾಜಕೀಯ ಯುದ್ಧಗಳನ್ನೇ ಇರಿಸಿಕೊಂಡು ಚರಿತ್ರೆ ಮತ್ತು ವರ್ತ ಮಾನವನ್ನು ನೋಡುವವರಿಗೆ, ಜನ ಕಟ್ಟುವ ಈ ಸೃಜನಶೀಲ ಪರಂಪರೆ ತಿಳಿಯುವುದಿಲ್ಲ. ಮೊಹರಂ ತಾಳಿರುವ ಬಹುರೂಪವು ಸಂಪ್ರದಾಯವಾದಿಗಳನ್ನು ಕಂಗೆಡಿಸುತ್ತದೆ. ‘ಇದೆಂತಹ ಧರ್ಮ; ಎಲ್ಲ ಕಲಬೆರಕೆಯಾಗಿದೆ’ ಎಂದವರು ಗೊಣಗುವರು. ಆದರೆ ಸಾಮಾನ್ಯ ಜನ ಧರ್ಮ, ಜಾತಿಗಳನ್ನು ಮೀರಿ ಸೃಷ್ಟಿಸಿಕೊಂಡಿರುವ ಅಸ್ಮಿತೆಯಾಗಿ ಮೊಹರಂ ರೂಪುಗೊಂಡಿದೆ. ‘ಪ್ರಧಾನ’ ಧರ್ಮಗಳು ಸಂಘರ್ಷಕ್ಕೆ ಕಾಲು ಕೆರೆಯುತ್ತಿವೆ; ಪರಸ್ಪರ ಸಂವಾದ ಮಾಡುವ ಬಾಗಿಲು ಕಿಟಕಿಗಳನ್ನು ಮುಚ್ಚಿಕೊಳ್ಳುತ್ತಿವೆ. ಇಂತಹ ಸನ್ನಿವೇಶದಲ್ಲಿ, ಧರ್ಮಗಳ ನಡುವೆ, ಸಂಸ್ಕೃತಿಗಳ ನಡುವೆ ಸಂವಾದ ಸಾಧ್ಯವಿದೆ ಎಂದು ಮೊಹರಂ ತೋರಿಸಿಕೊಡುತ್ತದೆ.
ಪಟ: ಕವಿ ಕೆರೂರ ನದಾಫ ಸಾಹೇಬರೊಡನೆ; ಅಚೊಳ್ಳಿ ಬಿಚೊಳ್ಳಿ ಸೋಗುಗಾರ; ಹುಲಿವೇಷದ ಹರಕೆ ಹುಬ್ಬಳ್ಳಿ; ಕರ್ಬಲಾ ಕದನದಲ್ಲಿ ಕಾಸಿಮಲಿ ಸಾವು ಚಿತ್ರ; ಅಬ್ಬಾಸ ಅಲಿ ಸಮಾಧಿಯೆದುರು (ಕರ್ಬಲಾ, ಇರಾಕ್); ಹುಲಿವೇಷಕ್ಕೆ ಬಣ್ಣಗಾರಿಕೆ; ಹೆಜ್ಜಕುಣಿತ ಕುಷ್ಟಗಿ; ಕರ್ಬಲಾ ನಗರದಲ್ಲಿ ಶೋಕಾಚರಣೆ ( ಬರಹಕೃಪೆ:ನಿವೃತ್ತ ಪ್ರೊಫೆಸರ್ ರಹಮತ್ ತರೀಕೆರೆ, ಫೇಸ್ಬುಕ್ ನಿಂದ)ಸುದ್ದಿದಿನ.ಕಾಂ|ವಾಟ್ಸಾಪ್|9980346243)

ದಿನದ ಸುದ್ದಿ
ವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
ಸುದ್ದಿದಿನ,ಬೆಂಗಳೂರು:ಕೋಡಿಪಾಳ್ಯದಲ್ಲಿರುವ ವಿಶ್ವ ವೆಂಕಟೇಶ್ವರ ವಿದ್ಯಾಧಾನ ಕೇಂದ್ರದ ವಿರುದ್ಧ ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದಿಂದ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿ ಸಂಸ್ಥೆಯ ಹೆಸರಿಗೆ ಧಕ್ಕೆ ತರುವ ಹುನ್ನಾರ ಕಳೆದ 3 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಗಂಭೀರ ಆರೋಪ ಮಾಡಿದೆ.
ಕೇವಲ 20 ವಿದ್ಯಾರ್ಥಿಗಳಿಂದ ಆರಂಭವಾದ ಈ ಸಂಸ್ಥೆಯು ಇಂದು ವಿವಿಐಎಸ್ ಶಾಲೆ, ಕೆಬಿಸಿ ಪಿಯು ಕಾಲೇಜು ಮತ್ತು ವಿವಿ ಪದವಿ ಕಾಲೇಜುಗಳನ್ನು ಹೊಂದಿದೆ. ಬಡ ಕೂಲಿ ಕಾರ್ಮಿಕರು ಮತ್ತು ವಲಸೆ ಕುಟುಂಬಗಳ 600ಕ್ಕೂ ಹೆಚ್ಚು ಮಕ್ಕಳು ಇಲ್ಲಿ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಪದವಿ ಕಾಲೇಜು ಆರಂಭಿಸಲು ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದ ಖಾಲಿ ಕಟ್ಟಡವನ್ನು 5 ವರ್ಷಗಳ ಅವಧಿಗೆ ಬಾಡಿಗೆಗೆ ಪಡೆಯಲಾಗಿತ್ತು. ವಿಠಲಗಿರಿಧಾಮದ ಮಠಾಧೀಶರಾದ ಶ್ರೀ ನಿರ್ಮಲಾನಂದ ಪುರಿ ಅವರು ಪ್ರತಿ ವರ್ಷ 5% ಬಾಡಿಗೆ ಹೆಚ್ಚಳದ ಷರತ್ತಿನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.
ಸಂಸ್ಥೆಯ ಅಧ್ಯಕ್ಷರು ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ, ಖಾಲಿ ಇದ್ದ ದೊಡ್ಡ ಕೊಠಡಿಗಳಿಗೆ ವಿಭಜನೆ, ಬಾಗಿಲುಗಳನ್ನು ಅಳವಡಿಸಿ, ಫರ್ನಿಚರ್ ತುಂಬಿ ತರಗತಿಗಳನ್ನು ಆರಂಭಿಸಿದರು. ಕಳೆದ 7 ವರ್ಷಗಳಿಂದ ಈ ಕಟ್ಟಡದಲ್ಲಿಯೇ ತರಗತಿಗಳು ನಡೆಯುತ್ತಿದ್ದು, ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅದೇ ಮಠದ ಮತ್ತೊಂದು ಭಾಗವನ್ನು “ಟಾಮ್ ಅಂಡ್ ಜೆರ್ರಿ” ವಿಶೇಷ ಮಕ್ಕಳ ಶಾಲೆಗೆ ಬಾಡಿಗೆಗೆ ನೀಡಲಾಗಿದೆ.
ಆದರೆ ಕಳೆದ 3 ವರ್ಷಗಳಿಂದ ಶ್ರೀ ನಿರ್ಮಲಾನಂದ ಪುರಿ ಮತ್ತು ಅವರ ಹಿಂಬಾಲಕರು ಶೈಕ್ಷಣಿಕ ವಾತಾವರಣಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಕಾಲೇಜಿನ ಸಿಬ್ಬಂದಿಯ ಮೇಲೆ ಅವಾಚ್ಯ ಶಬ್ದಗಳ ಪ್ರಯೋಗ, ಪರೀಕ್ಷಾ ಸಮಯದಲ್ಲಿ ಸ್ವಾಮೀಜಿಯ ಹಿಂಬಾಲಕರು ಕಾಲೇಜಿನ ಒಳಗೆ ನುಗ್ಗಿ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ಹರಡುವ ಮೂಲಕ ಸಂಸ್ಥೆಯ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆಡಳಿತ ಮಂಡಳಿ ದೂರಿದೆ.
ಇದರ ಜೊತೆಗೆ ಇನ್ನೊಂದು ಗಂಭೀರ ಆರೋಪ ಕೇಳಿಬಂದಿದೆ. ವಿಠಲ ರುಕ್ಮಿಣಿ ಮಠದ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನನ್ನು *”ಗೋಶಾಲೆ ಮತ್ತು ವೃದ್ಧಾಶ್ರಮ”*ಕ್ಕಾಗಿ ಮಂಜೂರು ಮಾಡಲಾಗಿದೆ. ಆದರೆ ಮಂಜೂರಾದ ಉದ್ದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ಜಮೀನನ್ನು ವಾಣಿಜ್ಯ ಉದ್ದೇಶಕ್ಕಾಗಿ ಹಂತಹಂತವಾಗಿ ಬಾಡಿಗೆಗೆ ನೀಡಲಾಗುತ್ತಿದೆ.
ಸಭಾಂಗಣದಲ್ಲಿದ್ದ ದೇವರ ಮೂರ್ತಿಯನ್ನು ಸಹ ಹಣಕ್ಕಾಗಿ ಬೇರೆ ಕಡೆಗೆ ವರ್ಗಾಯಿಸಿ ವಾಣಿಜ್ಯ ಉದ್ದೇಶಕ್ಕೆ ಬಳಸಲಾಗಿದೆ. ಸರ್ಕಾರವು ಈ ಜಾಗವನ್ನು ಗೋಶಾಲೆ ಮತ್ತು ವೃದ್ಧಾಶ್ರಮ ನಡೆಸುವುದಕ್ಕೆ ಮಂಜೂರು ಮಾಡಿದ್ದರೂ, ಇಲ್ಲಿ ಯಾವುದೇ ಗೋಶಾಲೆ ಅಥವಾ ವೃದ್ಧಾಶ್ರಮ ನಡೆಯುತ್ತಿಲ್ಲ. ಮಠದ ಆಸ್ತಿಯನ್ನು ಸ್ವಾಮೀಜಿ ಮತ್ತು ಅವರ ಹಿಂಬಾಲಕರು ಕಮರ್ಷಿಯಲ್ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಆಡಳಿತ ಮಂಡಳಿಯ ಆರೋಪ.
ಈ ಬೆಳವಣಿಗೆಯಿಂದಾಗಿ ಕಾಲೇಜಿನಲ್ಲಿ ಓದುತ್ತಿರುವ ನೂರಾರು ಬಡ ವಿದ್ಯಾರ್ಥಿಗಳ ಭವಿಷ್ಯ ಪ್ರಶ್ನಾರ್ಥಕವಾಗಿದೆ. ಕಂದಾಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ತನಿಖೆ ನಡೆಸಿ ಮಠದ ಸ್ವಾಮೀಜಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಆಡಳಿತ ಮಂಡಳಿ ಮತ್ತಷ್ಟು ಆರೋಪಿಸಿರುವ ಪ್ರಕಾರ, ಮಠದ ಸ್ವಾಮೀಜಿ ಸಾರ್ವಜನಿಕವಾಗಿ “ಮಠದ ಆಸ್ತಿಯನ್ನು ಸರ್ಕಾರದಿಂದ 54 ಲಕ್ಷ ರೂ.ಗೆ ಖರೀದಿ ಮಾಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ. ಅವರ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಒಬ್ಬ ವೃದ್ಧ ಮಹಿಳೆಯನ್ನು ಮೋಸ ಮಾಡಿ ಸೈಟ್ ಕಬಳಿಕೆ ಮಾಡಿ ಬೇರೊಬ್ಬರಿಗೆ ಮಾರಾಟ ಮಾಡಲಾಗಿದೆ. ಅಲ್ಲದೆ ಒಬ್ಬ ವೈದ್ಯರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ನೀಡುವುದಾಗಿ ಹೇಳಿ 10 ಲಕ್ಷ ರೂ. ಟೋಕನ್ ಹಣ ಪಡೆದು, ಹಣ ಹಿಂತಿರುಗಿಸದೆ ಸಮಸ್ಯೆ ಮಾಡಿದ ಪ್ರಕರಣವೂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. “ಹಣಕ್ಕಾಗಿ ಕಾವಿ ಧರಿಸಿ ಸಮಾಜಕ್ಕೆ ನಾಚಿಕೆ ತರುವ ಕೆಲಸ ಮಾಡುತ್ತಿದ್ದಾರೆ” ಎಂದು ಆಡಳಿತ ಮಂಡಳಿ ಆರೋಪಿಸಿದೆ.
~ವರದಿ: ಪವನ್ ಕಲ್ಯಾಣ್ ಡಿ.ಜಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಅತ್ಯಂತ ಸಂಕೀರ್ಣ ಶಸ್ತ್ರಚಿಕಿತ್ಸೆಯಲ್ಲಿ, ವೈದ್ಯರು ಟ್ಯೂಮರ್ (ಗಡ್ಡೆ) ಯನ್ನುಸಂಪೂರ್ಣವಾಗಿ ತೆಗೆದುಹಾಕುವುದರ ಜೊತೆಗೆ ಲಿವರ್ನ ಆರೋಗ್ಯಕರ ಭಾಗಗಳಿಗೆ ಯಾವುದೇ ಹಾನಿಯಾಗದಂತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ ಮೂಲದ ಈ ಮಹಿಳೆ, ಬೊಜ್ಜಿನ ಸಮಸ್ಯೆಯ ಜೊತೆಗೆ ಟೈಪ್-2 ಮಧುಮೇಹ ಮತ್ತು ಹೈಪೋಥೈರಾಯ್ಡಿಸಮ್ (ಥೈರಾಯ್ಡ್ ಸಮಸ್ಯೆ) ದಂತಹ ಕಾಯಿಲೆಗಳಿಂದಲೂ ಬಳಲುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ನಿರಂತರ ಹೊಟ್ಟೆನೋವು ಹಾಗೂ ಹಸಿವಾಗದಿರುವ ಸಮಸ್ಯೆಯಿಂದ ಅವರು ಒದ್ದಾಡುತ್ತಿದ್ದರು. ಇದಕ್ಕಾಗಿ ಸ್ಥಳೀಯ ಕ್ಲಿನಿಕ್ಗಳು ಮತ್ತು ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿನ ತಪಾಸಣೆಯಲ್ಲಿ ಅವರಿಗೆ ಲಿವರ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು.
ಸರಿಯಾದ ಚಿಕಿತ್ಸೆ ಸಿಗದೆ ಕಾಯಿಲೆ ಉಲ್ಬಣಗೊಂಡಿದ್ದಾಗ, ಅವರ ಪರಿಚಿತರೊಬ್ಬರು ದಾವಣಗೆರೆಯ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ಗೆ ಭೇಟಿ ನೀಡಿ, ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಆರ್.ಕೆ. ಹನುಮಂತ ನಾಯ್ಕ್ ಅವರನ್ನು ಸಂಪರ್ಕಿಸಲು ಸಲಹೆ ನೀಡಿದರು. ಮೊದಲ ತಪಾಸಣೆಯ ನಂತರ, ಮಹಿಳೆಯನ್ನು ಸ್ಕ್ಯಾನಿಂಗ್ ಮತ್ತು ಇತರ ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಈ ವೇಳೆ ಅವರ ಲಿವರ್ನ ಎಡಭಾಗದ (ಲೆಫ್ಟ್ ಲೋಬ್) ಆಳದಲ್ಲಿ ಗಡ್ಡೆಯೊಂದು ಬೆಳೆದಿರುವುದು ಕಂಡುಬಂತು. ಹೆಚ್ಚಿನ ಪರೀಕ್ಷೆಗಳ ನಂತರ ಇದು ‘ಇಂಟ್ರಾಹೆಪಾಟಿಕ್ ಚೋಲಾಂಜಿಯೋಕಾರ್ಸಿನೋಮ’ (intrahepatic cholangiocarcinoma) ಎಂಬ ಕಾಯಿಲೆ ಎಂದು ದೃಢಪಟ್ಟಿತು. ಈ ಹಿಂದೆಯೇ ಅವರಿಗೆ ಈ ಕಾಯಿಲೆ ಇರುವುದು ಪತ್ತೆಯಾಗಿದ್ದರೂ, ಶಸ್ತ್ರಚಿಕಿತ್ಸೆಯಲ್ಲಿನ ಸಂಕೀರ್ಣತೆಯ ಕಾರಣದಿಂದಾಗಿ ಹಿಂದಿನ ವೈದ್ಯರು ಅದನ್ನು ತೆಗೆದುಹಾಕಲು ಹಿಂದೇಟು ಹಾಕಿದ್ದರು.
ಸುಮಾರು 95 ಕೆ.ಜಿ ತೂಕವಿದ್ದ ಆ ಮಹಿಳೆ ಬೊಜ್ಜು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರಿಂದ, ಇಂತಹ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಪಡಿಸುವುದು ಅತ್ಯಂತ ಅಪಾಯಕಾರಿಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ, ಈ ರೋಗಿಯು ಶಸ್ತ್ರಚಿಕಿತ್ಸೆಯನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯರು ಹೃದಯ ಮತ್ತು ಶ್ವಾಸಕೋಶದ ವಿವರವಾದ ಪರೀಕ್ಷೆಗಳನ್ನು ನಡೆಸಿದರು.
ಈ ಸವಾಲಿನ ಪ್ರಕರಣವನ್ನು ಕೈಗೆತ್ತಿಕೊಂಡ ಡಾ. ಹನುಮಂತ ನಾಯ್ಕ್ ಮತ್ತು ಅವರ ತಂಡ, ಕ್ಯಾನ್ಸರ್ ಗಡ್ಡೆಯನ್ನು ಯಶಸ್ವಿಯಾಗಿ ತೆಗೆದುಹಾಕಲು ಸುಮಾರು ಆರು ಗಂಟೆಗಳ ಕಾಲ ಶ್ರಮಿಸಿತು. ಇದರ ಜೊತೆಗೆ ಸಾಕಷ್ಟು ಆರೋಗ್ಯಕರ ಲಿವರ್ ಸರಿಯಾಗಿ ಕಾರ್ಯನಿರ್ವಹಿಸುವಂತೆಯೂ ನೋಡಿಕೊಂಡಿತು. ಈ ಶಸ್ತ್ರಚಿಕಿತ್ಸೆಯು ಪಿತ್ತಕೋಶದ (ಗಾಲ್ ಬ್ಲಾಡರ್) ಜೊತೆಗೆ ಲಿವರ್ನ II, III, IVa ಮತ್ತು IVb ಭಾಗಗಳನ್ನು ತೆಗೆದುಹಾಕುವ ದೊಡ್ಡ ಶಸ್ತ್ರಚಿಕಿತ್ಸೆಯನ್ನು (ಮೇಜರ್ ಲೆಫ್ಟ್ ಹೆಪಟೆಕ್ಟಮಿ) ಒಳಗೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಮಧ್ಯದ ಹೆಪಾಟಿಕ್ ರಕ್ತನಾಳವನ್ನು ಅತ್ಯಂತ ಎಚ್ಚರಿಕೆಯಿಂದ ರಕ್ಷಿಸಲಾಯಿತು.
ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಅತ್ಯಂತ ತ್ವರಿತವಾಗಿ ಚೇತರಿಸಿಕೊಂಡರು. ಶಸ್ತ್ರಚಿಕಿತ್ಸೆ ಮುಗಿದ ಆರು ಗಂಟೆಗಳಲ್ಲೇ ದ್ರವಾಹಾರ ಸೇವಿಸಲು ಆರಂಭಿಸಿದ ಅವರು, ಕ್ರಮೇಣ ಮೃದುವಾದ ಆಹಾರವನ್ನು ಸೇವಿಸುವ ಹಂತಕ್ಕೆ ತಲುಪಿದರು. ಅವರ ಆರೋಗ್ಯ ಸ್ಥಿರವಾಗಿದ್ದರಿಂದ ಕೇವಲ ಐದು ದಿನಗಳಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
ಶಸ್ತ್ರಚಿಕಿತ್ಸೆ ಬಗ್ಗೆ ಮಾತನಾಡಿದ ಡಾ. ಆರ್. ಕೆ. ಹನುಮಂತ ನಾಯ್ಕ್, “ಟ್ಯೂಮರ್ನ ಗಾತ್ರ ಮತ್ತು ಅದು ಇದ್ದ ಜಾಗ, ಅದರ ಜೊತೆಗೆ ರೋಗಿಯ ಬೊಜ್ಜು ಮತ್ತು ಇತರ ವೈದ್ಯಕೀಯ ಸಮಸ್ಯೆಗಳಿಂದಾಗಿ ಇದು ತಾಂತ್ರಿಕವಾಗಿ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆಯಾಗಿತ್ತು. ಆರೋಗ್ಯಕರ ಲಿವರ್ ಅನ್ನು ಉಳಿಸಿಕೊಂಡು ಕ್ಯಾನ್ಸರ್ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆದುಹಾಕುವುದು ನಮ್ಮ ಮೊದಲ ಆದ್ಯತೆಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ ಎಚ್ಚರಿಕೆಯ ಮೌಲ್ಯಮಾಪನ, ಶಸ್ತ್ರಚಿಕಿತ್ಸೆಯ ನಿಖರವಾದ ಯೋಜನೆ ಮತ್ತು ಶಸ್ತ್ರಚಿಕಿತ್ಸೆಯ ನಂತರದ ವ್ಯವಸ್ಥಿತ ಆರೈಕೆಯು ಈ ಯಶಸ್ಸಿಗೆ ಕಾರಣವಾಯಿತು” ಎಂದು ತಿಳಿಸಿದರು.
ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಕೇಂದ್ರದ ಫೆಸಿಲಿಟಿ ಡೈರೆಕ್ಟರ್ ಶ್ರೀ ಸುನಿಲ್ ಭಂಡಾರಿಗಲ್ ಮಾತನಾಡಿ, “ಹೆಚ್ಚಿನ ಅಪಾಯದಲ್ಲಿದ್ದ ರೋಗಿಗೆ ಇಂತಹ ಸಂಕೀರ್ಣವಾದ ಲಿವರ್ ಟ್ಯೂಮರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿಭಾಯಿಸಿರುವುದು ನಮ್ಮ ಶಸ್ತ್ರಚಿಕಿತ್ಸಾ ತಂಡದ ಪರಿಣತಿ ಮತ್ತು ವಿವಿಧ ವಿಭಾಗಗಳ ವೈದ್ಯರ ಸಂಯೊಜನೆ ಆರೈಕೆಯ (multidisciplinary care) ಮಹತ್ವವನ್ನು ತೋರಿಸುತ್ತದೆ. ಸಂಕೀರ್ಣ ಆರೋಗ್ಯ ಸಮಸ್ಯೆಗಳಿಗೆ ಸುಧಾರಿತ, ಸಕಾಲಿಕ ಮತ್ತು ರೋಗಿ-ಕೇಂದ್ರಿತ ಚಿಕಿತ್ಸೆಯನ್ನು ಒದಗಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ” ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ5 days agoಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ
-
ಅಂತರಂಗ5 days agoದಿಮಾಗಿ ನಕ್ಸಲ್-ನಗರ ನಕ್ಸಲ್
-
ದಿನದ ಸುದ್ದಿ7 days agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ
-
ದಿನದ ಸುದ್ದಿ3 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ11 hours agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ

