Connect with us

ದಿನದ ಸುದ್ದಿ

ಇವರ ವಿವೇಕವಿಲ್ಲದ ವಿದ್ಯೆಗೆ ಬೆಂಕಿ ಬಿತ್ತು….‌ಛೇ !

Published

on

  • ಹಿರಿಯೂರು ಪ್ರಕಾಶ್

ವಿದ್ಯೆಗೂ ವಿವೇಕಕ್ಕೂ ಸಂಬಂಧವಿಲ್ಲವೆನ್ನುವುದು ಆಗಾಗ್ಗೆ ಸಾಬೀತಾಗುತ್ತಲೇ ಬಂದಿದೆ. ಅತ್ಯುನ್ನತ ಶ್ರೇಣಿಯಲ್ಲಿ ಡಿಗ್ರಿಗಳನ್ನು ಪಡೆದು ವಿದ್ಯಾವಂತರಾದರಷ್ಟೇ ಸಾಲದು , ಅದಕ್ಕೆ ಪೂರಕವಾದ ಕಾಮನ್ ಸೆನ್ಸ್ ಹಾಗೂ ಸ್ವಲ್ಪಮಟ್ಟಿಗೆ ವಿವೇಕವನ್ನೂ ಬೆಳೆಸಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ನಿಮ್ಮ ಡಿಗ್ರಿ ಸರ್ಟಿಫಿಕೇಟ್ ಒಂಥರಾ ವೇಸ್ಟ್ ಪೇಪರ್ ಇದ್ದಂತೆ ಕಸದ ಬುಟ್ಟಿಗೂ ಅನ್ ಫ಼ಿಟ್ !

ಈ ವಿಷಯ ಈಗ್ಯಾಕೆ ಬಂತು ಅಂತೀರಾ..??

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಇಬ್ಬರು ಸುಶಿಕ್ಷಿತ ಭೋಧಕ ದಂಪತಿಗಳು ಪರಾಕಾಷ್ಠೆಯ ಮೂಢನಂಬಿಕೆಗೆ ಮರುಳಾಗಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನವೇ ವಯಸ್ಸಿಗೆ ಬಂದ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭೀಭತ್ಸ ಘಟನೆಯನ್ನು ನೋಡಿದಾಗ ನಾನು ಮೇಲೆ ಉಲ್ಲೇಖಿಸಿರುವ ಮಾತುಗಳ ಸತ್ಯಾಸತ್ಯತೆ ತಿಳಿಯುತ್ತದೆ.

ಎಂತಹಾ ಪರಮ ನೀಚರು ಈ ಜನ ! ತಂದೆಯಾದ ಪುರುಷೋತ್ತಮ್ ನಾಯ್ಡು ಮದನಪಲ್ಲಿಯ ಮಹಿಳಾ ಪದವಿ ಕಾಲೇಜಿನಲ್ಲಿ ಪ್ರೊಫೆಸರ್ ಹಾಗೆಯೇ ತಾಯಿಯಾದ ಪದ್ಮಜಾ ಸಹಾ ಗಣಿತದಲ್ಲಿ ಗೋಲ್ಡ್ ಮೆಡಲ್ ಪಡೆದ ಶಿಕ್ಷಕಿ ಹಾಗೂ ವೈಸ್ ಪ್ರಿನ್ಸಿಪಾಲ್ ಅಂತೆ. ಈ ನರಾಧಮರ ನೀಚ ಕೃತ್ಯಕ್ಕೆ ಕಾರಣವೆಂದರೆ, ಮೊನ್ನೆ‌ ಭಾನುವಾರದಂದು ಕಲಿಯುಗ ಅಂತ್ಯವಾಗಿ ಮಾರನೆಯ ದಿನವೇ ಸತ್ಯಯುಗ ಆರಂಭವಾಗಿ ಆ ದಿನವೇ ತಮ್ಮ ಮಕ್ಕಳು‌ ಮರುಹುಟ್ಟು ಪಡೆಯಲಿದ್ದಾರೆಂದು ಯಾವನೋ ನಫ಼್ತಟಾಲ್ ನಾಲಾಯಕ್ ನನ್ಮಗ ಹೇಳಿದ್ದ ಮೂಢನಂಬಿಕೆಯ ಭವಿಷ್ಯವನ್ನು ನಂಬಿದ ಈ ಅಯೋಗ್ಯ ಪೇರೆಂಟ್ಸ್ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಮನೆಯ ದೇವರಕೋಣೆಯಲ್ಲಿ ವಿವಸ್ತ್ರಗೊಳಿಸಿ ತ್ರಿಶೂಲದಿಂದ ಹಾಗೂ ಡಂಬಲ್ಸ್‌ನಿಂದ ಕೊಚ್ಚಿ ಕೊಂದಿದ್ದಾರೆಂದು ಆನಂತರ ಶವಗಳ ಮುಂದೆ ಅವರ ತಾಯಿ ನರ್ತಿಸಿದ್ದಾರೆಂದೂ ವರದಿಯಾಗಿದೆ. ಇಷ್ಟಾದ ಮೇಲೂ ಕಿಂಚಿತ್ತೂ ಪಾಪ ಪ್ರಜ್ಞೆ ಯಿರದ ಈ ಪಾಪಿಗಳು ಪೋಲೀಸರ ಮುಂದೆಯೂ ತಮ್ಮ ಮಕ್ಕಳಿಬ್ಬರೂ ಮರುಹುಟ್ಟು ಪಡೆದು ಬರುತ್ತಾರೆಂದು ಹೇಳಬೇಕಾದರೆ ಹಾಗೂ ಪೋಲೀಸರು ಇನ್ನರ್ಧ ಘಂಟೆ ತಡವಾಗಿ ಬಂದಿದ್ದರೆ ಮಕ್ಕಳು ಬದುಕಿಬರುತ್ತಿದ್ದರೆಂದೂ ತಾನು ಶಿವನ ಅವತಾರವೆಂದೂ ಬಡಬಡಿಸಬೇಕಾದಲ್ಲಿ ಇವರು ಇನ್ನೆಂತಹಾ ಮೂಢನಂಬಿಕೆಯ ಜಗ ಭಂಡರಿರಬಹುದು ?? ಎಲ್ಲಕ್ಕಿಂತ ವಿಪರ್ಯಾಸವೆಂದರೆ ತಂದೆಯಾದವನು ವಿಜ್ಞಾನದ ವಿಷಯ ಭೋದಿಸುವವನಾದರೆ ತಾಯಿ ಗಣಿತದ ಶಿಕ್ಷಕಿ !ಈ ದಂಪತಿಗಳು ಅಲ್ಲಿನ ಆಧ್ಯಾತ್ಮಿಕ ಗುರು ಮೆಹರ್ ಬಾಬಾನ‌ ‘ಅನುನಾಯಿ”ಗಳಂತೆ !

ಈ ಘೋರ ಕೃತ್ಯಕ್ಕೆ ಬಲಿಯಾದ ಅಮಾಯಕ ಹೆಣ್ಣುಮಕ್ಕಳಾದ ಅಲೆಖ್ಯಾ ಹಾಗೂ ಸಾಯಿ ದಿವ್ಯಾ ಉದ್ಯೋಗ ನಿಮಿತ್ತ ಬೇರೆ ಊರುಗಳಲ್ಲಿದ್ದರೂ ಲಾಕ್ ಡೌನ್ ಕಾರಣದಿಂದ ತಂದೆ ತಾಯಿ ಜೊತೆಯಲ್ಲಿ ಇರಬೇಕಾಗಿದ್ದೇ ಮುಂದೆ ಅವರ ಹೀನಾಯ ಸಾವಿಗೆ ಕಾರಣವಾಗಬಹುದೆಂಬ ಅರಿವು ಅವರಿಗೆ ಇರಲಿಲ್ಲ ! ಈ ಜನ್ಮದಲ್ಲೇ ಅವರನ್ನು ಸುಖವಾಗಿರಿಸುವಂತಹಾ ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಸಹಜ ಯೋಚನೆ‌ ಬಿಟ್ಟು, ಇಲ್ಲದ ಸತ್ಯಯುಗದ ಹಿಂದೆ ಬಿದ್ದು ಇಂತಹಾ ಬರ್ಬರ ಕೃತ್ಯವೆಸಗಿರುವ ಈ ನರರಕ್ಕಸರ ತಲೆಯೊಳಗೆ ಅವನ್ಯಾವನೋ ಬೇಕೂಫ಼ಾ ಇನ್ನೆಂತಹಾ ನಂಬಿಕೆಯ ವಿಷ ತುಂಬಿದ್ದಿರಬಹುದು..??

ಈಗ ಹೇಳಿ ! ಕಲಿಯುಗದಲ್ಲಿ ಇಂತಹಾ ಘನಕಾರ್ಯ ಮಾಡಿದ ವಿದ್ಯಾವಂತ ದಂಪತಿಗಳನ್ನು ಯಾವ ವರ್ಗಕ್ಕೆ ಸೇರಿಸುತ್ತೀರಿ ?? ಇವರಂತಹಾ ಅವಿವೇಕಿಗಳು, ಮೂಢರು, ದುಷ್ಟರು, ಅಯೋಗ್ಯರು, ಕ್ರೂರಿಗಳು, ನಿಷ್ಕರುಣಿಗಳು, ಪಾಪಿಗಳು, ಸ್ವಾರ್ಥಿಗಳು, ಎಜುಕೇಟೆಡ್ ಫ಼ೂಲ್ ಗಳು, ಪರಮ ಪಾಪಿಷ್ಠರು…. ಮತ್ತಾರಾದರೂ ಇದ್ದಾರೆಯೇ ?? ತಾವೇ ಜನ್ಮಕೊಟ್ಟು ಸಾಕಿ ಬೆಳೆಸಿದ ಮಕ್ಕಳನ್ನು, ಅದರಲ್ಲೂ ವಯಸ್ಸಿಗೆ ಬಂದ ಹೆಣ್ಣುಮಕ್ಕಳನ್ನು ಈ ರೀತಿ ಮೂಢನಂಬಿಕೆಗೆ‌ ಬಲಿಯಾಗಿ ಅಮಾನವೀಯವಾಗಿ ಬಲಿ ತೆಗೆದುಕೊಂಡಿರುವ ಘಟನೆಯನ್ನು ಹಿಂದೆ ಎಂದಾದರೂ ಕೇಳಿದ್ದೀರಾ… ನೋಡಿದ್ದಿರಾ..! ಇದು ನನಗೆ ತಿಳಿದಂತೆ ‌ಇಡೀ ನಾಡಿನಲ್ಲೇ ಅಪರೂಪದಲ್ಲಿ ಅಪರೂಪದ್ದು !

ಇವರ ಮನೆ ಕಾಯ್ ಹೋಗ ! ಕಲಿಯುಗ ಮುಗಿದು‌ ಮತ್ತೇ ಸತ್ಯಯುಗದಲ್ಲಿ ಅದೇ ಮಕ್ಕಳು‌ ಹುಟ್ಟುತ್ತಾರೆಂಬ ಇವರ ಕ್ಷುದ್ರ ನಂಬಿಕೆಯೇ ಅತ್ಯಂತ ಡೆಂಜರಸ್ ! ಹೇಳುವ ಮುಂಡೆಗಂಡರಿಗಂತೂ ಮೂರುಕಾಸಿನ ಬುದ್ದಿ ಇಲ್ಲ. ಕಾಸಿಗಾಗಿ ಏನೆಲ್ಲಾ ಕಥೆ ಹೇಳುತ್ತಾರೆ. ಆದರೆ ಕಾಲೇಜಿನಲ್ಲಿ‌ ಪಾಠ ಮಾಡುವ, ಅದರಲ್ಲೂ ವಿಜ್ಞಾನ ಭೋಧಿಸುವ , ಅತ್ಯಂತ ಸುಶಿಕ್ಷಿತ ವರ್ಗಕ್ಕೆ ಸೇರಿದ ದಂಪತಿಗಳು ಇಂತಹವರ ಮಾತುಗಳನ್ನು ಕೇಳಿ ಈ ರೀತಿಯ ಭೀಭತ್ಸ ಕೃತ್ಯಕ್ಕೆ ಕೈ ಹಾಕುತ್ತಾರೆಂದರೆ ಅದಕ್ಕಿಂತ ದುರಂತ ಮತ್ತೊಂದಿದೆಯೇ ? ಅಲ್ಲಿಗೆ ಕಲಿತ ವಿದ್ಯೆಗೂ ತಲೆಯೊಳಗಿರಬೇಕಾದ ಕನಿಷ್ಠ ವಿವೇಕಕ್ಕೂ ಸಂಬಂಧವೇ ಇಲ್ಲದಂತಾಯಿತು !

ಮರೆಯುವ ಮುನ್ನ 

ಮನುಷ್ಯ ಏನೆಲ್ಲಾ ಓದಿರಬಹುದು, ಎಷ್ಟೆಷ್ಟು ಡಿಗ್ರಿಗಳನ್ನು ಮೈಗೆಲ್ಲಾ ಮೆತ್ತಿಕೊಂಡಿರಬಹುದು, ಆಕಾಶದಲ್ಲೇ ಸದಾ ಹಾರಾಡುತ್ತಿರಬಹುದು, ಕರಗದಷ್ಟು ಆಸ್ತಿಯನ್ನೇ ಸಂಪಾದಿಸಿರಬಹುದು ಆದರೆ ಮನುಷ್ಯ ಅಂದಮೇಲೆ ಇರಲೇಬೇಕಾದ ಕಾಮನ್ ಮಿನಿಮಮ್ ಕಾಮನ್ ಸೆನ್ಸ್ ಅವನಲ್ಲಿ ಇಲ್ಲವೆಂದಮೇಲೆ ಅವನ ಓದಿಗೆ ವಿದ್ಯೆಗೆ ಬೆಂಕಿ‌ಬಿತ್ತು ! ಹೆತ್ತಮಕ್ಕಳನ್ನೇ ಈ ಲೆವೆಲ್ ನಲ್ಲಿ ಭಯಂಕರವಾಗಿ ಕೊಲೆ ಮಾಡುವ ಮನಸ್ಥಿತಿಯಿರುವವರು ತಮ್ಮ ವಿಧ್ಯಾರ್ಥಿಗಳಿಗೆ ಯಾವ ನೈತಿಕತೆಯ ಪಾಠವನ್ನು ಹೇಳಿಕೊಡಬಲ್ಲರು.? ಓದಿದ ಓದಿಗೂ, ಕಲಿತ ವಿದ್ಯೆಗೂ, ಮಾಡುವ ವೃತ್ತಿಗೂ ಈಗ ಅವರು ಎಸಗಿರುವ ಹೀನ ಕೃತ್ಯಕ್ಕೂ ಏನಾದರೂ ತಾಳೆ ಇದೆಯೇ ? ಇಂತಹಾ ಘಟನೆಗಳನ್ನೆಲ್ಲಾ ನೋಡಿದಾಗ ಮನುಷ್ಯನಷ್ಟು ವಿಷಕಾರಿ ಅಪಾಯಕಾರಿ ಜಂತು ಈ ಭೂಮಿಯಲ್ಲೇ ಇಲ್ಲವೇನೋ ಅನಿಸುತ್ತದೆ.

ಇಂತಹಾ ವಿಕ್ಷಿಪ್ತ ಮನಸ್ಥಿತಿಗೆ ಏನು ಕಾರಣವೋ ಗೊತ್ತಿಲ್ಲ. ಆದರೆ ಯಾವ್ಯಾವುದೋ ಹೆಸರಿನಲ್ಲಿ ಹುದುಗಿರುವ ಅತಿಯಾದ ಮೂಢನಂಬಿಕೆ , ಭ್ರಮಾತ್ಮಕ ಲೋಕ, ಮಾನವೀಯ ಮೌಲ್ಯಗಳ ಬೆಲೆಯರಿಯದ ಬದುಕು,
ಸ್ವಯಂಘೋಷಿತ ದೇವಮಾನವರು, ಬಾಬಾಗಳು , ಮಾಟ ಮಂತ್ರ ಮಾಡುವವರ ಮೇಲಿನ ಕುರುಡು ನಂಬಿಕೆ ಹಾಗೂ ಅಂತಹವರು ಹೇಳಿದ್ದೇ ವೇದವಾಕ್ಯವೆಂದು ನಂಬುವ ಅಜ್ಞಾನ…. ಈ ಎಲ್ಲವೂ ಕೆಲಮಟ್ಟಿಗೆ ಕಾರಣವಿರಲೂಬಹುದು..!

ಏನಾದರೂ ಇರಲಿ ! ಹೆತ್ತವರಿಂದಲೇ ಬರ್ಬರವಾಗಿ ಹತ್ಯೆಗೊಳಗಾಗಿ ನೆತ್ತರ ಮಡುವಲ್ಲಿ ಕೊನೆಯುಸಿರೆಳೆದ ಆ ಅಮಾಯಕ ಹೆಣ್ಣುಮಕ್ಕಳ ಆತ್ಮಕ್ಕೆ ಶಾಂತಿ ಕೋರುವುದು ಹಾಗೂ ಇಂತಹಾ ದುರ್ಘಟನೆಗಳು ಮತ್ತೇ ನೆಡೆಯದಿರಲಿ ಎಂದು ಪ್ರಾರ್ಥಿಸುವುದೊಂದೇ ಉಳಿದಿರುವ ದಾರಿ..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending