Connect with us

ದಿನದ ಸುದ್ದಿ

ಆತ್ಮೀಯ ಮುಸ್ಲಿಂ ಗೆಳೆಯರಿಗಾಗಿ, ಗೌರವಪೂರ್ವಕವಾಗಿ..!

Published

on

  • ವಿವೇಕಾನಂದ. ಹೆಚ್.ಕೆ.

ಹೌದು, ನಿಮಗೆ ತ್ರಿವಳಿ ತಲ್ಲಾಖ್ ವಿಷಯದಲ್ಲಿ, ಬಾಬರಿ ಮಸೀದಿ ವಿವಾದದ ತೀರ್ಪಿನ ವಿಷಯದಲ್ಲಿ, ಗೋ ಮಾಂಸ ನಿಷೇಧದ ವಿಚಾರದಲ್ಲಿ, ಸಿಎಎ – ಎನ್ ಆರ್ ಸಿ ತಿದ್ದುಪಡಿಯಲ್ಲಿ ಒಟ್ಟಾರೆಯಾಗಿ ಭಾರತದ ಈಗಿನ ಸರ್ಕಾರದ ಧೋರಣೆಯ ಬಗ್ಗೆ ಅಸಮಾಧಾನ ಇರಬಹುದು ಅಥವಾ ಇದೆ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಅದರ ಬಗ್ಗೆ ದೇಶಾದ್ಯಂತ ಪ್ರತಿಭಟನೆಗಳು ಸಹ ಇತ್ತೀಚಿನ ವರೆಗೂ ನಡೆಯುತ್ತಿತ್ತು. ಅದು ನಿಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಂವಿಧಾನಾತ್ಮಕ ಹಕ್ಕು.

ಆದರೆ ಈ ನಡುವೆ ಅನಿರೀಕ್ಷಿತವಾಗಿ ಕೊರೋನಾ ವೈರಸ್ ಇಡೀ ದೇಶವನ್ನು ಆಕ್ರಮಿಸಿ ಜೀವ ಉಳಿಸಿಕೊಳ್ಳುವುದೇ ಒಂದು ದೊಡ್ಡ ಸಾಹಸವಾಗಿದೆ. ಜಾತಿ ಧರ್ಮ ಭಾಷೆ ಪಕ್ಷ ಪಂಥ ದೇವರು ಎಲ್ಲವೂ ಹಿನ್ನೆಲೆಗೆ ಸರಿದಿದೆ ಮತ್ತು ಸರಿಯಲೇಬೇಕು.

ಮಾಧ್ಯಮಗಳಲ್ಲಿ ಸ್ವಲ್ಪ ಪಕ್ಷಪಾತ, ದುಡುಕುತನ, ಅತಿರಂಜಿತ ವರದಿಗಳು ಇದೆ ಎಂದೇ ಭಾವಿಸಿದರೂ,ಇತರೆ ಧರ್ಮದ ಕೆಲವು ಕಾರ್ಯಕ್ರಮಗಳು ಸಹ ನಡೆದವು ಎಂಬುದು ನಿಜವಾದರೂ ಇಲ್ಲಿ ಯಾವುದೇ ನೆಪ ಹೇಳದೆ, ಯಾವುದೇ ಕಾರಣ ನೀಡದೆ ವೈದ್ಯಕೀಯ ಕ್ಷೇತ್ರದ ಸಲಹೆಯಂತೆ ಸರ್ಕಾರಗಳು ತೆಗೆದುಕೊಳ್ಳುವ ತೀರ್ಮಾನಗಳನ್ನು ಸಂಪೂರ್ಣ ಬೆಂಬಲಿಸುವ ಕರ್ತವ್ಯ ಮತ್ತು ಜವಾಬ್ದಾರಿ ಎಲ್ಲರಿಗೂ ಇದೆ.

ವಿರೋಧಿ ಗುಂಪಿನವರು ಒಂದಷ್ಟು ರಾಜಕೀಯ ಗೊಳಿಸುವುದು, ಪ್ರಚೋದಿಸುವುದು ಇದ್ದರೂ ಅದಕ್ಕೆ ಈಗ ಹೆಚ್ಚಿನ ಮಹತ್ವ ಕೊಡಬಾರದು. ಈ ದೇಶದ ಹಕ್ಕು ಮತ್ತು ಕರ್ತವ್ಯಗಳು ನಿಮಗೂ ಸಹ ಸಮ ಪ್ರಮಾಣದಲ್ಲಿ ಇದೆ. ಇದನ್ನು ಈಗ ಏಕೆ ಹೇಳಬೇಕಾಯಿತೆಂದರೆ ಮಸೀದಿಗಳಲ್ಲಿ ಈಗಲೂ ಸಾಮೂಹಿಕ ಪ್ರಾರ್ಥನೆಯ‌ ವರದಿಗಳು ಅಲ್ಲಲ್ಲಿ‌ ಕೇಳಿ ಬರುತ್ತಿರುವುದರಿಂದ.

ಇದು ಸಾವು ಬದುಕಿನ ಮತ್ತು ಹಸಿವು ಅಸ್ತಿತ್ವದ ಪ್ರಶ್ನೆ. ಇಡೀ ಭಾರತೀಯ ಜನ ಸಮುದಾಯ ಆತಂಕದಿಂದ ಇದ್ದು ಪ್ರತಿ ಕ್ಷಣವನ್ನೂ ತುಂಬಾ ಎಚ್ಚರಿಕೆಯಿಂದ ಗಮನಿಸುತ್ತಿದೆ. ಈಗ ಇಡುವ ಪ್ರತಿ ಹೆಜ್ಜೆಯೂ ಬಹಳಷ್ಟು ಚರ್ಚೆಗೆ ಗ್ರಾಸವಾಗುತ್ತದೆ ಮತ್ತು ಜನರ ಮನಸ್ಸಿನಲ್ಲಿ ಉಳಿಯುತ್ತದೆ.

ಈಗಾಗಲೇ ಮನಸ್ಸುಗಳು ಒಡೆದಿವೆ. ಎರಡೂ ಕಡೆ ಪ್ರಚೋದನಾತ್ಮಕ ಮಾತುಗಳು ಪರಿಸ್ಥಿತಿ ಕೈ ಮೀರುವಂತೆ ಮಾಡಿದೆ. ಧರ್ಮ, ರಾಜಕೀಯ ಮನೆಯೊಳಗೆ ಮನಸ್ಸುಗಳೊಳಗೆ ಬಂದಾಗಿದೆ. ಧರ್ಮಾಂಧತೆ ದೇಶವನ್ನು ಆಕ್ರಮಿಸಿಕೊಂಡಿದೆ. ಮೊದಲಿನಿಂದಲೂ ಇದ್ದ ಹಿಂದೂ ಮುಸ್ಲಿಂ ವೈಮನಸ್ಯ ಈಗ ಇನ್ನೂ ದೊಡ್ಡದಾಗಿದೆ.

ಮುಸ್ಲಿಂ ಭಾಂಧವರೆ ನಿಮ್ಮ ಆತ್ಮಾವಲೋಕನಕ್ಕಾಗಿ ಇತ್ತೀಚಿನ ಒಂದು ವರದಿ

38.40 ಲಕ್ಷ ಜನರ ಸಾವು. ಕೇವಲ 9 ವರ್ಷಗಳಲ್ಲಿ.2011 ರಿಂದ ಇಲ್ಲಿಯವರೆಗೆ.ಸಿರಿಯಾ ದೇಶದ ಆಂತರಿಕ ಯುದ್ಧದಿಂದಾಗಿ.ಗಂಡಸರೆಷ್ಟೋ, ಹೆಂಗಸರೆಷ್ಟೋ, ಮಕ್ಕಳೆಷ್ಟೋ,.ಯಾವ ಯಾವ ಭೀಕರ ರೀತಿಯಲ್ಲಿ ಯಾತನೆ ಅನುಭವಿಸಿ ಸತ್ತರೋ. ಬಹುತೇಕ ತಮ್ಮ ಅರ್ಧ ಆಯಸ್ಸನ್ನೂ ಮುಗಿಸದೇ ತೀರಿ ಹೋದರು.ಅವರನ್ನು ಅಲ್ಲಾ ಎಂಬ ದೇವರು ಸೃಷ್ಟಿಸಿದ್ದರು, ಇಸ್ಲಾಂ ಎಂಬ ಧರ್ಮ ಬೆಳೆಸಿತ್ತು, ಷಿಯಾ ಸುನ್ನಿ ಖುರ್ದ್ ಎಂಬ ಹೆಸರುಗಳು ವಿಭಜಿಸಿದ್ದವು ಎಂದು ನಂಬಲಾಗುತ್ತದೆ. ಆದರೆ ಯಾವುದೂ ಅವರ ರಕ್ಷಣೆಗೆ ಬರಲಿಲ್ಲ, ಕೇವಲ ಸುಮಾರು 1.80 ಕೋಟಿ ಜನಸಂಖ್ಯೆಯ ದೇಶದಲ್ಲಿ ಘರ್ಷಣೆಗೆ ಸತ್ತವರು 38.40 ಲಕ್ಷ ಜನರು.

ನನಗವರು ಮನುಷ್ಯರು ಮಾತ್ರ

ಸೃಷ್ಟಿಯಲ್ಲಿ ಗಂಡು ಹೆಣ್ಣಿನ ಮಿಲನದಿಂದ ಮತ್ತೊಂದು ಜೀವ ಜನ್ಮ ತಾಳುತ್ತದೆ.‌ಸಿರಿಯಾದಲ್ಲಿ ಮಗು ಜನಸಿದರೆ ಮುಸ್ಲಿಂ ಎನ್ನುತ್ತಾರೆ. ಇಂಗ್ಲೆಂಡ್ ನಲ್ಲಿ ಜನಸಿದರೆ ಕ್ರಿಶ್ಚಿಯನ್, ಇಸ್ರೇಲ್ ನಲ್ಲಿ ಯಹೂದಿ, ಜಪಾನ್ ನಲ್ಲಿ ಬೌದ್ದ, ಭಾರತದಲ್ಲಿ ಹಿಂದೂ ಎಂದು ಸಾಮಾನ್ಯವಾಗಿ ಕರೆಯಲಾಗುತ್ತದೆ .ಈ ವ್ಯತ್ಯಾಸಗಳೇ ಮಾನವ ಕುಲಕ್ಕೆ ಶಾಪವಾಗಿ ಪರಿಣಮಿಸಿದೆ.

ಹಿಂದೆ ಕ್ರಿಶ್ಚಿಯನ್ ಧರ್ಮದ ಯೂರೋಪಿಯನ್ ದೇಶಗಳಲ್ಲೂ ಇದಕ್ಕಿಂತ ಭಯಂಕರ ಮಾನವ ಹತ್ಯಾಕಾಂಡಗಳು ನಡೆದಿವೆ.ಫ್ರೆಂಚ್‌ ಕ್ರಾಂತಿಯ ರಕ್ತಪಾತ, ಎರಡು ಮಹಾಯುದ್ಧಗಳು, ಇಟಲಿ ದಂಗೆ, ಹಿಟ್ಲರನ ಸಾವಿನ ಶಿಬಿರಗಳು, ರಷ್ಯಾ ದೌರ್ಜನ್ಯ ಎಲ್ಲವೂ ಇತಿಹಾಸದಲ್ಲಿ ದಾಖಲಾಗಿದೆ.

ಹಾಗೆಯೇ ಹಿಂದೂ ಜೀವನಶೈಲಿಯ ಭಾರತದಲ್ಲೂ ಹಿಂಸೆಯ ಪ್ರಮಾಣ ಕಡಿಮೆ ಏನಿಲ್ಲ. ಕ್ರಿಸ್ತ ಪೂರ್ವದಲ್ಲೇ ಬುದ್ದ ಮಹಾವೀರರು ಅಹಿಂಸೆಯ ಬಗ್ಗೆ ಗಂಭೀರವಾಗಿ ಮಾತನಾಡಿದ್ದಾರೆ ಎಂದರೆ ಆಗಲೇ ಹಿಂಸೆಯ ಪ್ರಮಾಣ ಎಷ್ಟಿತ್ತು ಎಂದು ಊಹಿಸಬಹುದು.

ಕಾರಣಗಳು ಏನೇ ಇರಲಿ
ಈ ಕ್ಷಣದಲ್ಲಿ ಪಾಕಿಸ್ತಾನ, ಇರಾನ್, ಇರಾಕ್, ಸಿರಿಯಾ, ಆಪ್ಘನಿಸ್ತಾನ, ಯೆಮೆನ್, ಟರ್ಕಿ ಮುಂತಾದ ಇಸ್ಲಾಮಿಕ್ ದೇಶಗಳೇ ಹೆಚ್ಚು ಸಾವು ನೋವಿಗೆ, ಆಂತರಿಕ ಕಲಹಗಳಿಗೆ ತುತ್ತಾಗುತ್ತಿವೆ.

ಈಗ ಗಂಭೀರವಾಗಿ ಯೋಚಿಸುವ ಸಮಯ ಬಂದಿದೆ. ಎಲ್ಲಾ ಧರ್ಮಗಳ ಮೂಲ ಆಶಯ ಮೂಲೆಗುಂಪಾಗಿ ಕೇವಲ ಆಚರಣೆಗಳು ಮಾತ್ರ ಜಾರಿಯಲ್ಲಿವೆ. ಇದಕ್ಕೆ ಇಸ್ಲಾಂ ಸಹ ಹೊರತಲ್ಲ.

ಹೌದು, ಭಾರತೀಯ ಮುಸ್ಲಿಮರಲ್ಲಿ ಬಡತನ ಅಜ್ಞಾನ ಗಾಢ ಧಾರ್ಮಿಕ ನಂಬಿಕೆಗಳು ಮನೆ ಮಾಡಿವೆ. ಧರ್ಮ ಗುರುಗಳ ಮಾತಿಗೆ ಅತಿ ಹೆಚ್ಚಿನ ಮಹತ್ವ ನೀಡುತ್ತಾರೆ. ಪ್ರಚೋದನಕಾರಿಯಾಗಿ ಮಾತನಾಡುವ ಹಿಂದೂಗಳು ಸಹ ಇದನ್ನು ಗಮನಿಸಬೇಕು. ಆತಂಕದಿಂದ ಎಲ್ಲಾ ತಪ್ಪುಗಳನ್ನು ಒಂದು ಸಮುದಾಯದ ತಲೆಗೆ ಕಟ್ಟಬಾರದು. ಸಂಯಮ ಅಗತ್ಯ.

ವಿವೇಚನೆ ಅಗತ್ಯ. ಕರೋನ ಬಂದಿದೆ ಎಂಬ ಒಂದೇ ಕಾರಣದಿಂದ ದಿನ ಬೆಳಗಾಗುವುದರಲ್ಲಿ ಎಲ್ಲರಲ್ಲೂ ದಿಡೀರನೇ ಪ್ರಬುದ್ದತೆ ನಿರೀಕ್ಷಿಸಲಾಗುವುದಿಲ್ಲ. ಸಬ್ ಕಾ ಸಾಥ್ ಸಬ್ ವಿಕಾಸ್ ಕೇವಲ ಘೋಷಣೆಯಾಗಬಾರದು. ಅದು ನಡವಳಿಕೆಯಾಗಬೇಕು. ಮಾಧ್ಯಮಗಳಂತೆ ವಿವೇಚನಾರಹಿತವಾಗಿ ಕೂಗಾಡಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಗಳನ್ನು ಹರಡಬಾರದು. ಅದರಿಂದ ದೇಶಕ್ಕೆ ಅಪಾಯವೇ ಹೆಚ್ಚು.

ಎಲ್ಲಾ ಅಲ್ಪಸಂಖ್ಯಾತರಿಗೆ ಇರುವ ಅಭದ್ರತೆಯ ನಡುವೆಯೂ, ಮುಸ್ಲಿಂ ಸಮುದಾಯದಲ್ಲಿ ಪ್ರಗತಿಪರ ಚಿಂತನೆಗಳು ಸಮೂಹ ಪ್ರಜ್ಞೆಯಾಗಿ ಜಾಗೃತವಾಗಬೇಕು. ಧರ್ಮದ ಮೇಲಿನ ಅವಲಂಬಿನೆ ಕಡಿಮೆಯಾಗಬೇಕಿದೆ. ಅದಕ್ಕೆ ಹಿಂದೂಗಳು ಸಹ ಪ್ರೇರಣೆಯಾಗಬೇಕೆ ಹೊರತು ಪ್ರಚೋದಕರಾಗಬಾರದು. ಸುಮಾರು 18 ಕೋಟಿ ಜನಸಂಖ್ಯೆಯ ಒಂದು ಸಮುದಾಯವನ್ನು ಅಭದ್ರತೆಗೆ ತಳ್ಳಿ ದೇಶದ ಅಭಿವೃದ್ಧಿ ಶಾಂತಿ ಸಾಧ್ಯವೇ ಇಲ್ಲ.

ಎರಡೂ ಧರ್ಮಗಳಲ್ಲಿ ಕ್ರಿಯೆ ಪ್ರತಿಕ್ರಿಯೆಗಳು ಪ್ರಚೋದನಾತ್ಮಕವಾಗಿದ್ದು ಇದೇ ಕಾರಣದಿಂದ ಧೈರ್ಯವಾಗಿ ಮಾತನಾಡುವ ಖಂಡಿಸುವ ಸತ್ಯವನ್ನು ಬಯಲಿಗೆ ಎಳೆಯುವ ಜನರು ಕಡಿಮೆಯಾಗಿದ್ದಾರೆ. ಧರ್ಮ ಒಂದು ಸೂಕ್ಷ್ಮ ವಿಷಯ ಎಂಬ ನೆಪದಿಂದ ಮಾತನಾಡಲು ಹೆದರುತ್ತಾರೆ. ತಮ್ಮ ತಮ್ಮ ‌ಧರ್ಮ ದೇವರು ಗ್ರಂಥಗಳಲ್ಲಿ ಅಡಗಿರುವವರನ್ನು ನಾಗರಿಕ ಪ್ರಜ್ಞೆಗೆ ಎಳೆದು ತರಬೇಕಿದೆ. ಇದು ತುಂಬಾ ಕಷ್ಟ. ಆದರೂ ಮನುಷ್ಯನ ಉಳಿವಿಗಾಗಿ ನಿಂತ ನೀರಾಗಿ ಕೊಳೆತು ನಾರುತ್ತಿರುವ ಧಾರ್ಮಿಕತೆಯನ್ನು ಬಯಲಿಗೆ ಎಳೆಯಬೇಕಿದೆ. ಇಲ್ಲದಿದ್ದರೆ ಮುಂದಿನ ದಿನಗಳು ಇನ್ನಷ್ಟು ಭಯಂಕರ ಸ್ಥಿತಿ ತಲುಪುತ್ತದೆ. ಬಲವೇ ನ್ಯಾಯ ಎಂಬ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending