Connect with us

ದಿನದ ಸುದ್ದಿ

ಪ್ರಾತಃ ಸ್ಮರಣೀಯ ಸಮಾಜವಾದಿ ಮಹಾರಾಜ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ..!

Published

on

ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ 4, 1848- ಆಗಸ್ಟ್ 3, 1940) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ 24ನೇ ರಾಜರು. ಇವರ ಆಳ್ವಿಕೆ1902 ರಿಂದ1940 ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು1895 ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ 10 ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ, ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದುದರ ಪರಿಣಾಮವಾಗಿ, ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ದೊರಕಿದರು.

ಮಾದರಿ ಮೈಸೂರು

1902ರ ಆಗಸ್ಟ್ 8ನೇ ತಾರೀಖಿನಿಂದ ಮೈಸೂರು ರಾಜ್ಯದ ನೇರ ಉಸ್ತುವಾರಿ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು. ಆಗ ದಿವಾನರಾಗಿದ್ದ ಸರ್. ಕೆ. ಶೇಷಾದ್ರಿ ಐಯ್ಯರ್ ರವರ ಸಹಕಾರದೊಡನೆ ಮೈಸೂರು ರಾಜ್ಯದ ಸರ್ವತೋಮಖ ಅಭಿವೃದ್ದಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ಕಂಕಣ ಬದ್ದರಾದರು.

ಇವರ ಕಾಲದಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ದಿಯನ್ನು ಮೈಸೂರು ರಾಜ್ಯವು ಕಂಡುದರಿಂದ, ಮೈಸೂರು ಸಂಸ್ಥಾನಕ್ಕೆ ‘ಮಾದರಿ ಮೈಸೂರು’ ಎಂಬ ಕೀರ್ತಿ ಪ್ರಾಪ್ತವಾಯಿತು. ನಾಲ್ವಡಿ ಕೃಷ್ಣರಾಜ ಒಡೆಯ ರು ಅರಸು ಮನೆತನದಿಂದ ಬಂದವರಾಗಿದ್ದರೂ ಸಹ, ಜನತೆ ಆಡಳಿತದಲ್ಲಿ ಪಾಲ್ಗೊಳ್ಳುವಿಕೆಯ ಪರವಾಗಿದ್ದರು.

ಪ್ರಜಾ ಪ್ರತಿನಿಧಿ ಸಭೆ

ಆದುದರಿಂದ ಅವರ ಕಾಲದಲ್ಲಿ ಮೈಸೂರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಇದ್ದ ‘ಪ್ರಜಾ ಪ್ರತಿನಿಧಿ ಸಭೆ’ಯು ನೂತನ ರೂಪವನ್ನು ಪಡೆದು, ನಿಜವಾದ ಜನ ಪ್ರತಿನಿಧಿ ಸಭೆಯಾಗಿ ಪರಿವರ್ತನೆಯಾಯಿತು. ಅದಕ್ಕಾಗಿ 1923ರರಲ್ಲಿ ಹೊಸ ಕಾನೂನೊಂದನ್ನು ಜಾರಿಗೆ ತಂದು, ಪ್ರಜಾ ಪ್ರತಿನಿಧಿ ಸಭೆಯನ್ನು ಶಾಸನಬದ್ದ ಸಂಸ್ಥೆಯನ್ನಾಗಿ ಮಾರ್ಪಡಿಸಿದರು. ಇದು (ಪ್ರಜಾತಂತ್ರದ ದೃಷ್ಟಿಯಿಂದ ಭಾರತದಲ್ಲಿಯೇ ಮಾದರಿಯಾದ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲು ಆರಂಭಿಸಿತು. ಪ್ರಜಾ ಪ್ರತಿನಿಧಿ ಸಭೆಯು ವರ್ಷಕ್ಕೆ ಎರಡು ಬಾರಿ (1 ಜೂನ್ – ಮಹಾರಾಜರ ವರ್ಧಂತಿ , 2 ಅಕ್ಟೋಬರ್ – ದಸರಾ ಮಹೋತ್ಸವ ) ಸಮಾವೇಶಗೊಂಡು ಕಲಾಪಗಳನ್ನು ನಡೆಸುತ್ತಿತ್ತು ಅಲ್ಲಿ ವಾರ್ಷಿಕ ಆಯ ವ್ಯಯ ಪರಿಶೀಲನೆ, ಪ್ರಶ್ನೋತ್ತರಗಳು, ಠರಾವುಗಳನ್ನು ಮಂಡಿಸುವುದು ಮುಂತಾದ ಸಂಸದೀಯ ಮಾದರಿಯ ನಡವಳಿಕೆಗಳು ನಡೆಯುತ್ತಿದ್ದವು. ಪ್ರತಿನಿಧಿ ಸಭೆಯಲ್ಲಿದ್ದ ೨೭೫ ಸದಸ್ಯರಲ್ಲಿ ಹೆಚ್ಚು ಪ್ರತಿನಿಧಿಗಳು ಜನರಿಂದ ಆಯ್ಕೆಯಾದವರಾಗಿದ್ದರು.

ನ್ಯಾಯ ವಿಧಾಯಕ ಸಭೆ

ಇದರ ಜೊತೆಗೆ1907 ರಲ್ಲಿ ‘ನ್ಯಾಯ ವಿಧಾಯಕ’ ಸಭೆಯನ್ನೂ ಸಹ ಸ್ಥಾಪಿಸಲಾಯಿತು. ಇದರ ಸದಸ್ಯರ ಸಂಖ್ಯೆ 50. ಇದರಲ್ಲಿ ಜನರಿಂದ ಆಯ್ಕೆಯಾದವರು 23ಸದಸ್ಯರು. ಮೇಲ್ಮನೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಸಂಸ್ಥೆ, ಜೂನ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿತ್ತು.

ಪ್ರಜಾ ಪ್ರತಿನಿಧಿ ಸಭೆಯಲ್ಲಿ ಮಂಡಿಸಿದ ಎಲ್ಲ ವಿಷಯಗಳನ್ನೂ ಸಹ ವಿಮರ್ಶಿಸುವ ಅಧಿಕಾರ ಆ ಸಭೆಗೆ ಇದ್ದಿತು. ಮುಖ್ಯವಾಗಿ ಯಾವುದೇ ಕಾನೂನನ್ನು ಜಾರಿಗೊಳಿಸಲು ಆ ಸಭೆಯ ಅನುಮತಿ ಅಗತ್ಯವಾಗಿತ್ತು .ಆ ಸಭೆಗೆ ಸರ್ಕಾರದ ಖರ್ಚು ಗಳನ್ನು ಕಡಿಮೆ ಮಾಡುವ ಅಧಿಕಾರ ಸಹ ಇದ್ದಿತು.

ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ

ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರೆ, ಸ್ಥಳೀಯ ಸಂಸ್ಥೆಗಳನ್ನು ರಚಿಸಿ, ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟುದು. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು.

ಇವರ ಕಾಲದಲ್ಲಿ…

  • ಗ್ರಾಮ ನಿರ್ಮಲೀಕರಣ
  • ವೈದ್ಯ ಸಹಾಯ
  • ವಿದ್ಯಾ ಪ್ರಚಾರ
  • ನೀರಿನ ಸೌಕರ್ಯ
  • ಪ್ರಯಾಣ ಸೌಲಭ್ಯ

ಮುಂತಾದ ಕ್ಷೇತ್ರಗಳು ಸ್ವಯಮಾಡಳಿತ ಸಂಸ್ಥೆಗಳಾದವು. ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನ ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು ’ ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ. ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪಗಳ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ಕೊಟ್ಟು 1905ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು.

ಹೊಸ ರೈಲು ದಾರಿಗಳ ನಿರ್ಮಾಣ

  1. ಮೈಸೂರು – ಅರಸೀಕೆರೆ
  2. ಬೆಂಗಳೂರು – ಚಿಕ್ಕಬಳ್ಳಾಪುರ
  3. ಚಿಕ್ಕಜಾಜೂರು – ಚಿತ್ರದುರ್ಗ
  4. ನಂಜನಗೂಡು – ಚಾಮರಾಜನಗರ
  5. ತರೀಕೆರೆ – ನರಸಿಂಹರಾಜಪುರ
  6. ಶಿವಮೊಗ್ಗ – ಆನಂದಪುರ

ಈ ಎಲ್ಲ ರೈಲು ಮಾರ್ಗಗಳನ್ನು1931 ರ ವೇಳೆಗೆ ಪೂರೈಸಲಾಯಿತು .

ನೀರಾವರಿ

1907 ರಲ್ಲಿ ‘ವಾಣೀವಿಲಾಸ ಸಾಗರ’ (ಮಾರಿ ಕಣಿವೆ) ಕಟ್ಟಲ್ಪಟ್ಟಿತು. 1911ರಲ್ಲಿ ಆರಂಭವಾದ ‘ಕೃಷ್ಣರಾಜ ಸಾಗರ’ ಭಾರತದ ಮೊಟ್ಟ ಮೊದಲ ಬೃಹತ್ ಜಲಾಶಯ. 1900ರಲ್ಲಿಯೇ ಶಿವನ ಸಮುದ್ರದ ಬಳಿ ಕಾವೇರಿ ನದಿಯಿಂದ ಜಲ ವಿದ್ಯುತ್ ಕೇಂದ್ರ ಆರಂಭವಾಯಿತು. ಇದು ಭಾರತದ ಮೊದಲ ಜಲ ವಿದ್ಯುತ್ ಕೇಂದ್ರ.

ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು. ಇದರ ಫಲಿತಾಂಶವಾಗಿ 1905 ಆಗಸ್ಟ್ 3 ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು. ಸತತ 24 ವರ್ಷಗಳ ಕಾಲ ಕಾಮಗಾರಿ ನಡೆಸಿ ಕೃಷ್ಣ ರಾಜ ಸಾಗರ ( ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟು) ನಿರ್ಮಿಸಿದರು.

ವಿದ್ಯಾಭ್ಯಾಸ

ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು, ಉಚಿತವಾಗಿ ಮತ್ತು ಕಡ್ಡಾಯವಾಗಿ ಆರಂಭಿಸಲಾಯಿತು. ನಾಲ್ವಡಿ ಕೃಷ್ಣರಾಜರ ಮಹತ್ತರ ಸಾಧನೆಯೆಂದರೆ ಮೈಸೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದುದು. ದೇಶದಲ್ಲೇ ಮೊಟ್ಟಮೊದಲ ವಿಶ್ವವಿದ್ಯಾನಿಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ 270 ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು.

ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು. ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. 1096 ರಲ್ಲಿಯೇ ಸಹಕಾರ ಸಂಘಗಳನ್ನು ಸ್ಥಾಪಿಸಲಾಯಿತು. ರೈತರಿಗಾಗಿ ಜಮೀನು ಅಡಮಾನ ಬ್ಯಾಂಕುಗಳು ಆರಂಭವಾದವು.

ಜಾರಿ ಮಾಡಿದ ಸಾಮಾಜಿಕ ಕಾನೂನುಗಳು

  • 1909 ರಲ್ಲಿ ದೇವದಾಸಿ ಪದ್ಧತಿ ನಿಷೇಧ
  • 1910ರಲ್ಲಿ ಬಸವಿ ಪದ್ಧತಿ ರದ್ಧತಿ
  • 1910 ರಲ್ಲಿ ’ಗೆಜ್ಜೆಪೂಜೆ’ ಪದ್ಧತಿ ಸಂಪೂರ್ಣ ನಿರ್ಮೂಲನೆ
  • 1936 ಜುಲೈ 14 ರಂದು ವೇಶ್ಯಾವೃತ್ತಿ ತಡೆಗಟ್ಟುವ ಕಾಯ್ದೆ ಜಾರಿ
  • 1936ಜುಲೈ 7 ರಂದು ವಿಧವೆಯರಿಗೆ ಮರುವಿವಾಹ ಮಾಡಿಕೊಳ್ಳುವ ಕಾಯ್ದೆಯ ಜಾರಿ
  • 1936 ಜುಲೈ 7 ರಂದು ಸ್ತ್ರೀಯರಿಗೆ ಕಡ್ಡಾಯ ಶಿಕ್ಷಣ ಜಾರಿ
  • 1914 ರಲ್ಲಿ ಶಾಲಾ ಪ್ರವೇಶಕ್ಕೆ ಜಾತಿ ಪರಿಗಣನೆಯ ನಿಷೇಧ
  • 1919ರಲ್ಲಿ ಮಾಧ್ಯಮಿಕ ಶಾಲಾ ಮಟ್ಟದಲ್ಲಿ ಶಿಕ್ಷಣ ಶುಲ್ಕ ರದ್ಧತಿ
  • 1927 ರಲ್ಲಿ ಸ್ತ್ರೀಯರಿಗೆ ಮತದಾನದ ಹಕ್ಕನ್ನು ಮೊಟ್ಟಮೊದಲ ಬಾರಿಗೆ ಕಲ್ಪಿಸಿಕೊಟ್ಟರು
  • 1905 ರಲ್ಲಿ ಸಹಕಾರಿ ಕಾರ್ಮಿಕ ಪರಿಹಾರ ಕಾಯ್ದೆಯನ್ನು ಜಾರಿಗೆ ತಂದರು
  • 1913 ರಲ್ಲಿ ಮೈಸೂರು ಗ್ರಾಮ ನ್ಯಾಯಾಲಯ ಕಾಯ್ದೆಯನ್ನು ಜಾರಿ ಮಾಡಿದರು
  • 1918 ರಲ್ಲಿ ಗ್ರಾಮ ಪಂಚಾಯ್ತಿಗಳ ಕಾಯ್ದೆಯನ್ನು ಜಾರಿಗೆ ತಂದರು

ನೂರು ವರ್ಷಗಳ ಹಿಂದೆಯೇ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ಕೊಟ್ಟವರು.

ಮಹಾತ್ಮ ಗಾಂಧಿ ಯವರಿಂದ ” ರಾಜರ್ಷಿ ” ಎಂಬ ಗೌರವ ಪಡೆದವರು.

ಮಾಹಿತಿ : ವಿವಿಧ ಮೂಲಗಳು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending