Connect with us

ನೆಲದನಿ

ಕೇರಳವೆಂಬ ಹುಚ್ಚಾಸ್ಪತ್ರೆಯಲ್ಲಿ ವಿವೇಕ ಬಿತ್ತಿದ ಗುರು

Published

on

  • ದಿನೇಶ್ ಅಮಿನ್ ಮಟ್ಟು

ರ್ನಾಟಕದ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯ ಫಲಿತಾಂಶ ಕೋಮುವಾದಿಗಳ ವಿರುದ್ದದ ಜಾತ್ಯತೀತರ ಗೆಲುವು ಎಂದು ವ್ಯಾಖ್ಯಾನಿಸುವವರಿದ್ದಾರೆ. ಇಲ್ಲ ಇದು ಒಂದು ಪಕ್ಷ ಸೋತು ಇನ್ನೊಂದು ಪಕ್ಷ ಗೆದ್ದ ಸಾಮಾನ್ಯ ರಾಜಕೀಯ ಬದಲಾವಣೆ ಎಂದು ಸರಳೀಕರಿಸುವವರೂ ಇದ್ದಾರೆ. ವಾಸ್ತವ ಎಲ್ಲೋ ಈ ಎರಡು ಅಭಿಪ್ರಾಯಗಳ ಮಧ್ಯೆ ಇದ್ದ ಹಾಗಿದೆ. ಇಂತಹ ಭಿನ್ನ ಅಭಿಪ್ರಾಯಗಳೇನಿದ್ದರೂ ಈ ಚುನಾವಣೆಯಲ್ಲಿ ನೆಲಕಚ್ಚಿದ ಕೋಮುವಾದಿ ರಾಜಕಾರಣ ಮತ್ತೆ ಜೀವಪಡೆಯದಂತೆ ನೋಡಿಕೊಳ್ಳುವ ಹೊಣೆ ರಾಜ್ಯದ ಎಲ್ಲ ಪ್ರಜ್ಞಾವಂತರ ಮೇಲಿದೆ.

‘ಕೋಮುವಾದ’ ದ ರಾಜಕಾರಣವನ್ನು ಎದುರಿಸುವ ಸರಿಯಾದ ಮತ್ತು ಯಶಸ್ವಿ ಅಸ್ತ್ರ ಎಂದರೆ ‘’ಸಾಮಾಜಿಕ ನ್ಯಾಯ’’ದ ರಾಜಕಾರಣ. ಈ ಮೂಲಕ ಕೋಮುವಾದ ರಾಜಕಾರಣ ಮಾಡುತ್ತಾ ಬಂದವರೂ ಅನಿವಾರ್ಯವಾಗಿ ‘ಸಾಮಾಜಿಕ ನ್ಯಾಯ’ದ ರಾಜಕೀಯದ ಆಟದ ನಿಯಮಗಳನ್ನೇ ಪಾಲಿಸುವಂತೆ ಮಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಬೇಕಾಗಿದೆ.
‘ಸಾಮಾಜಿಕ ನ್ಯಾಯ’ದ ರಾಜಕಾರಣಕ್ಕೆ ದಾರಿತೋರಿಸಬಲ್ಲ ಅನೇಕ ಯಶಸ್ವಿ ಚಿಂತನೆಗಳ ಮಾದರಿಗಳು ನಮ್ಮ ಮುಂದಿವೆ. ಇವರಲ್ಲಿ ಬುದ್ಧ, ಬಸವಣ್ಣ, ಅಂಬೇಡ್ಕರ್, ರಾಮಮನೋಹರ ಲೋಹಿಯಾ ಚಿಂತನೆಯ ಮಾದರಿಗಳ ಬಗ್ಗೆ ವಿಸ್ತೃತವಾದ ಚರ್ಚೆ ಕರ್ನಾಟಕದಲ್ಲಿ ನಡೆದಿವೆ. ರಾಜ್ಯದಲ್ಲಿ ಹೆಚ್ಚುಚರ್ಚೆಗೊಳಗಾಗದ ಇನ್ನೊಂದು ಮಾದರಿ ಕೇರಳದ ಸಮಾಜ ಸುಧಾರಕ ನಾರಾಯಣ ಗುರುಗಳ ಚಿಂತನೆಯದ್ದು. ನಾವಿಂದು ಕಾಣುತ್ತಿರುವ ಪುರೋಗಾಮಿ ಮತ್ತು ಪ್ರಗತಿಗಾಮಿ ಕೇರಳದ ರೂವಾರಿ ನಾರಾಯಣ ಗುರುಗಳು. ಅವರ ಪ್ರವೇಶಕ್ಕೆ ಮುನ್ನ ಹಿಂದೂ ಸಮಾಜದ ಸುಧಾರಣೆಯ ಪ್ರಯತ್ನದಲ್ಲಿದ್ದ ಸ್ವಾಮಿ ವಿವೇಕಾನಂದರೇ ಕೇರಳ ರಾಜ್ಯ ಒಂದು ಹುಚ್ಚಾಸ್ಪತ್ರೆ’ ಎಂದು ಕೈಚೆಲ್ಲಿ ಹೋಗಿದ್ದರು.

ಜಾತಿವ್ಯವಸ್ಥೆ ಆ ರೀತಿಯ ಭೀಕರ ಮನೋರೋಗಿಗಳನ್ನು ಅಲ್ಲಿ ಸೃಷ್ಟಿಸಿತ್ತು. ದೇವಸ್ಥಾನ ಪ್ರವೇಶ ದೂರವೇ ಉಳಿಯಿತು. ಅದರ ಎದುರಿನ ರಸ್ತೆಯಲ್ಲಿ ಕೂಡಾ ಅಸ್ಪøಶ್ಯರು ನಡೆದಾಡುವಂತಿರಲಿಲ್ಲ. ಮಹಾತ್ಮ ಗಾಂಧೀಜಿ ಮತ್ತು ನಾರಾಯಣ ಗುರುಗಳ ನೇತೃತ್ವದಲ್ಲಿ ನಡೆದ ಐತಿಹಾಸಿಕ ವೈಕಂ ಸತ್ಯಾಗ್ರಹ ನಡೆದದ್ದು ದೇವಸ್ಥಾನ ಪ್ರವೇಶಕ್ಕಾಗಿ ಅಲ್ಲ, ಅದರ ಮುಂಭಾಗದ ರಸ್ತೆಯಲ್ಲಿ ನಡೆದಾಡುವ ಸ್ವಾತಂತ್ರ್ಯಕ್ಕಾಗಿ ಎಂಬುದು ಗಮನಾರ್ಹ. ಒಂದೆಡೆ ಮೂಡನಂಬಿಕೆ,ಕಂದಾಚಾರಗಳು, ಇನ್ನೊಂದೆಡೆ ಮೇಲ್ವರ್ಗದವರ ದೌರ್ಜನ್ಯದಿಂದ ಅಲ್ಲಿ ಬಹುಸಂಖ್ಯೆಯಲ್ಲಿರುವ ತಳಸಮುದಾಯ ನಲುಗಿಹೋಗಿತ್ತು.

ಆದರೆ, ಇದೇ ಕೇರಳ ಇಂದು ದೇಶದಲ್ಲಿಯೇ ಅತ್ಯಂತ ಹೆಚ್ಚು ಸಾಕ್ಷರತೆ ಇರುವ ಮತ್ತು ಪ್ರಗತಿಪರ ಚಿಂತಕರಿರುವ ರಾಜ್ಯ. ಪ್ರಜಾಸತಾತ್ಮಕವಾಗಿ ಆಯ್ಕೆಯಾದ ದೇಶದ ಮೊದಲ ಹಾಗೂ ಜಗತ್ತಿನ ಎರಡನೇ ಕಮ್ಯೂನಿಸ್ಟ್ ಸರ್ಕಾರ ಅಸ್ತಿತ್ವಕ್ಕೆ ಬಂದದ್ದು ಕೇರಳದಲ್ಲಿ. ದೇಶ ವಿಭಜನೆ ಕಾಲದಲ್ಲಿ ಉತ್ತರ ಭಾರತ ಕೋಮುದಳ್ಳುರಿಯಲ್ಲಿ ಹತ್ತಿ ಉರಿಯುತ್ತಿದ್ದಾಗ ಶೇ.18ಕ್ಕೂ ಹೆಚ್ಚು ಮುಸ್ಲಿಂ ಜನಸಂಖ್ಯೆ ಇರುವ ಕೇರಳ ಶಾಂತವಾಗಿತ್ತು. ಅಡ್ವಾನಿಯವರ ರಥಯಾತ್ರೆಯ ನಂತರ ದೇಶಾದ್ಯಂತ ಕೋಮುಗಲಭೆ ಭುಗಿಲೆದ್ದಾಗಲೂ ಅಲ್ಲಿ ಯಾವ ಅಹಿತಕರ ಘಟನೆಗಳು ನಡೆಯಲಿಲ್ಲ. ದಕ್ಷಿಣದ ರಾಜ್ಯಗಳಲ್ಲಿ ಪ್ರಯಾಸಪಟ್ಟು, ಪ್ರವೇಶ ಪಡೆದ ಬಿಜೆಪಿಯನ್ನು ಈಗಲೂ ಹೊಸಲಿನಾಚೆ ನಿಲ್ಲಿಸಿರುವ ರಾಜ್ಯ ಕೇರಳ.

ಕೇವಲ ನೂರು ವರ್ಷಗಳ ಅವಧಿಯಲ್ಲಿ ಕೇರಳದಲ್ಲಿ ನಡೆದ ಈ ಸಾಮಾಜಿಕ ಮತ್ತು ರಾಜಕೀಯ ಬದಲಾವಣೆಗೆ ಕಾರಣಗಳನ್ನು ಶೋಧಿಸುತ್ತಾ ಹೋದರೆ ನಮ್ಮೆದುರು ನಿಧಾನವಾಗಿ ನಾರಾಯಣ ಗುರು ಎಂಬ ಸಂತ ನಡೆಸಿದ್ದ ಧಾರ್ಮಿಕ ಚಳುವಳಿ ತೆರೆದುಕೊಳ್ಳುತ್ತದೆ. ನಾರಾಯಣ ಗುರುಗಳು ಹುಟ್ಟಿ ಸರಿಯಾಗಿ ನೂರು ವರ್ಷಗಳ ಅವಧಿಯಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ಕಮ್ಯುನಿಸ್ಟ್ ಸರ್ಕಾರ ಅಸ್ತಿತ್ವಕ್ಕೆ ಬಂತೆಂಬುದು ಉಲ್ಲೇಖನೀಯ. ನಾರಾಯಣ ಗುರುಗಳು ಪ್ರಾರಂಭಿಸಿದ ಧಾರ್ಮಿಕ ಸುಧಾರಣಾ ಚಳವಳಿಯನ್ನು ಈ ಹಿನ್ನೆಲೆಯಲ್ಲಿ ನೋಡಬೇಕಾಗುತ್ತದೆ. ಅವರ ಕಾರ್ಯತಂತ್ರ ಉಳಿದ ಸಮಾಜ ಸುಧಾರಕರಿಗಿಂತ ಯಾಕೆ ಭಿನ್ನವಾಗಿತ್ತು ಎಂಬ ಪ್ರಶ್ನೆಗಳಿಗೆ ಈ ಹಿನ್ನೋಟದಲ್ಲಿ ಉತ್ತರ ಇದೆ.

ಒಂದು ಚಳವಳಿಯ ಸೋಲು-ಗೆಲುವು, ಅದರ ಸಿದ್ದಾಂತ, ಸಂಘಟನೆ ಮತ್ತು ಹೋರಾಟದ ನೆಲಗಳನ್ನು ಅವಲಂಭಿಸಿರುತ್ತೇ. ನಾರಾಯಣ ಗುರು ಚಳವಳಿಯ ಎಲ್ಲಾ ಮಗ್ಗಲುಗಳನ್ನು ಈ ರೀತಿ ಸಮಾಜ ವಿಜ್ಞಾನದ ಹಿನ್ನೆಲೆಯಲ್ಲಿ ಅಧ್ಯಯನ ನಡೆಸುವ ಪ್ರಯತ್ನ ಕನ್ನಡದಲ್ಲಿ ನಡೆದಿಲ್ಲ. ಈ ರೀತಿಯ ಅಧ್ಯಯನದ ಕೊರತೆಯಿಂದಾಗಿಯೇ ನಾರಾಯಣ ಗುರು ಒಬ್ಬರದ್ದೇ ವೈಭವೀಕರಣ ನಡೆದು ಆ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ನಾರಾಯಣ ಗುರುಗಳ, ಅನೇಕ ಅನುಯಾಯಿಗಳ ಪರಿಚಯ ಹೊರಜಗತ್ತಿಗೆ ಆಗಿಲ್ಲ.

ನಾರಾಯಣ ಗುರು ಚಳವಳಿ, ಪ್ರಮುಖವಾಗಿ ಐದು ಹಂತಗಳಲ್ಲಿ ನಡೆಯಿತು.ಮೊದಲನೆಯದು ಡಾ.ಪಲ್ಪು ನೇತೃತ್ವದ ಸಾಮಾಜಿಕ ಜಾಗೃತಿ, ಎರಡನೇಯದ್ದು ನಾರಾಯಣ ಗುರು ನೇತೃತ್ವದ ಸಾಮಾಜಿಕ ಸುಧಾರಣೆ, ಮೂರನೆಯದ್ದು ಕುಮಾರನ್ ಆಶಾನ್ ನೇತೃತ್ವದ ಸರ್ಕಾರಿ ಶಾಲೆಗಳಲ್ಲಿ ಪ್ರವೇಶಕ್ಕಾಗಿ ನಡೆದ ಚಳವಳಿ, ನಾಲ್ಕನೇಯದ್ದು ಟಿ.ಕೆ ಮಾಧವನ್ ನೇತೃತ್ವದಲ್ಲಿ ದೇವಾಲಯಗಳ ಪ್ರವೇಶ ಮತ್ತು ಅಸ್ಪøಶ್ಯತೆಯ ವಿರುದ್ಧ ನಡೆದ ಚಳವಳಿ ಹಾಗೂ ಕೊನೆಯದ್ದು, ಸಿ.ಕೇಶವನ್ ನೇತೃತ್ವದಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕಾಗಿ ನಡೆದ ಹೋರಾಟ. ಈ ಎಲ್ಲಾ ಹೋರಾಟಗಳು ನಾರಾಯಣ ಗುರುಗಳ ಸಿದ್ಧಾಂತ ನೆಲೆಗಟ್ಟಿನ ಮೇಲೆಯೇ ನಡೆದಿವೆ.

ಧಾರ್ಮಿಕ ಸುಧಾರಣೆಯ ಮೂಲಕ ಪ್ರಾರಂಭಗೊಂಡ ನಾರಾಯಣ ಗುರು ಚಳವಳಿ ಕಾಲ ಸರಿದಂತೆ ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಆಯಾಮಗಳನ್ನು ಪಡೆದುಕೊಂಡು ಬೆಳೆಯುತ್ತಾ ಹೋಗಿದ್ದು ಆಕಸ್ಮಿಕವಲ್ಲ, ಅದು ಗುರುಗಳೇ ರೂಪಿಸಿದ ಕಾರ್ಯ ತಂತ್ರವೇನೋ ಎಂಬ ಅನುಮಾನ ಮೂಡುತ್ತದೆ.. ಸಮಾಜದ ಅಮೂಲಾಗ್ರ ಬದಲಾವಣೆ ಎಂದರೆ, ಪ್ರಮುಖವಾಗಿ ಆರ್ಥಿಕ ಮತ್ತು ಸಾಮಾಜಿಕ ಬದಲಾವಣೆ ಎಂಬುದನ್ನು ನಾರಾಯಣ ಗುರು ಅರಿತಿದ್ದರು. ಇಂತಹ ಬದಲಾವಣೆಗೆ ಸಮುದಾಯದ ಮನಸ್ಸನ್ನು ಸಿದ್ದಗೊಳಿಸುವ ಪ್ರಾಥಮಿಕ ಕಾರ್ಯವನ್ನು ಅವರು ದೇವಾಲಯಗಳ ಸ್ಥಾಪನೆ ಮೂಲಕ ಮಾಡಿದರು.
ಅಸ್ಪøಶ್ಯತೆಯ ವಿರುದ್ಧದ ಹೋರಾಟಗಳಲ್ಲಿ ದೇವಸ್ಥಾನ ಪ್ರವೇಶ ಚಳವಳಿಯದ್ದು ಪ್ರಮುಖ ಪಾತ್ರವಾದರೆ, ನಾರಾಯಣ ಗುರುಗಳು ಅದನ್ನೇ ಕೈಬಿಟ್ಟಿದ್ದರು. ಅವರು ಸವರ್ಣೀಯರ ಒಡೆತನದ ದೇವಾಲಯ ಪ್ರವೇಶಿಸಲಿಲ್ಲ. ಅದನ್ನು ಬಹಿಷ್ಕರಿಸಿದರು. ಮತ್ತು ಅವರ್ಣಿಯ ದೇವಾಲಯಗಳನ್ನು ಸ್ಥಾಪಿಸಿದರು. ಆದರೆ, ಅವರು ಮತ್ತೊಂದು ಧರ್ಮವನ್ನು ಕೂಡ ಸ್ಥಾಪಿಸಲು ಹೋಗಲಿಲ್ಲ.

ಮೊದಲು ದೇವಸ್ಥಾನ ಪ್ರವೇಶ ಚಳವಳಿ ನಡೆಸದೆ, ದೇವಸ್ಥಾನ ನಿರ್ಮಿಸುವ ಅವರ ಕಾರ್ಯತಂತ್ರ ಎರಡು ರೀತಿಯಲ್ಲಿ ಅವರಿಗೆ ನೆರವಾಯಿತು. ದೇವಸ್ಥಾನ ಪ್ರವೇಶ ಹೋರಾಟಕ್ಕೆ ಎದುರಾಗುವ ಪ್ರತಿಭಟನೆಯನ್ನು ಎದುರಿಸುವ ಸಂಘಟನಾ ಶಕ್ತಿ ಅಸ್ಪøಶ್ಯರಲ್ಲಿ ಆಗಿನ್ನೂ ಇರಲಿಲ್ಲ ಎಂದು ನಾರಾಯಣ ಗುರುಗಳಿಗೆ ತಿಳಿದಿತ್ತು. ನಾರಾಯಣ ಗುರು ಮೊದಲ ದೇವಸ್ಥಾನ ಸ್ಥಾಪಿಸಿದ ಮೂವತ್ತಾರು ವರ್ಷಗಳ ನಂತರ ದೇವಾಲಯಗಳ ಮುಂಭಾಗದ ರಸ್ತೆಗಳಲ್ಲಿ ನಡೆಯುವ ಹಕ್ಕಿಹಾಗಿ ನಡೆದ ವೈಕಂ ಸತ್ಯಾಗ್ರಹಕ್ಕೆ ಎದುರಾದ ಪ್ರತಿಭಟನೆಯನ್ನು ನೋಡಿದರೆ, ಇದು ಸ್ಪಷ್ಟವಾಗುತ್ತದೆ.

ದೇವಸ್ಥಾನದ ಸ್ಥಾಪನೆಯನ್ನು ಪ್ರಶ್ನಿಸಿದ ಪುರೋಹಿತರಿಗೆ ನಾನು ಸ್ಥಾಪಿಸಿದ್ದು ಈಳವರ ಶಿವ ಎಂಬ ಮಾರ್ಮಿಕ ಉತ್ತರ ಕೊಟ್ಟು ಗುರುಗಳು ಯುದ್ದಕ್ಕೆ ಬಂದ ಅವರನ್ನು ಶಸ್ತ್ರಪ್ರಯೊಗವಿಲ್ಲದೆಯೇ ನಿಶ್ಯಸ್ತ್ರಗೊಳಿಸಿದರು. ಅದೇ ರೀತಿ, ಸಹಸ್ರಾರು ವರ್ಷಗಳಿಂದ ತಮ್ಮಿಂದ ದೂರವೇ ಉಳಿದಿದ್ದ ದೇವಸ್ಥಾನಗಳಿಗೆ ಪ್ರವೇಶಿಸಲು ಅಡ್ಡಿಯಾಗುವ ಸಾಂಪ್ರದಾಯಿಕ ಮನಸ್ಸಿನ ಹಿಂಜರಿಕೆ ಹಾಗೂ ಭೀತಿಯಿಂದಲೂ ಕೆಳವರ್ಗದ ಜನರನ್ನು ಅವರು ಮುಕ್ತಗೊಳಿಸಿದರು. ದೇವಾಲಯಕ್ಕೆ ಹೋಗುವ ಹಕ್ಕು ನಿಮಗಿಲ್ಲವಾದರೆ, ದೇವಾಲಯವನ್ನೇ £ಮ್ಮಲ್ಲಿಗೆ ತರುತ್ತೇನೆ ಎಂದು ಅಸ್ಪøಶ್ಯರಿಗೆ ಪೂಜೆಯ ಹಕ್ಕನ್ನು £ೀಡುವ ಮೂಲಕ ಅವರಲ್ಲಿ ಸ್ವಾಭಿಮಾನ ಜಾಗೃತಿಗೆ ಕಾರಣರಾದರು.

ದೇವಸ್ಥಾನಗಳ ಸ್ಥಾಪನೆ ಅಂದಿನ ಪುರೋಹಿತಶಾಹಿಗೆ ಅಘಾತಕಾರಿಯಾದ ಹೊಡೆತ, ಭಕ್ತ ಸಮೂಹದಲ್ಲಿ ದೈಹಿಕವಾಗಿ ದೂರವೇ ಉಳಿದಿದ್ದ ಮೂರನೇ ಎರಡರಷ್ಟಿದ್ದ ಕೆಳವರ್ಗದ ಜನರು ಮಾನಸಿಕವಾಗಿ ಕೂಡ ದೂರವೇ ಉಳಿದರೆ, ದೇವಸ್ಥಾನಗಳ ಹುಂಡಿ ತುಂಬುವುದು ಹೇಗೆ? ಅದರ ಮೂಲಕ ಉದರ ತುಂಬುವುದು ಹೇಗೆ ? ಎಂಬ ಭೀತಿ ಅವರನ್ನಾವರಿಸಿತ್ತು. ನಾರಾಯಣ ಗುರುಗಳ ನಂತರ ಕೇರಳದಲ್ಲಿ ಸವರ್ಣಿಯ ದೇವಾಲಯಗಳ ಆದಾಯದಲ್ಲಿ ಗಣನೀಯ ಕುಸಿತ ಕಂಡುಬಂದಿರುವುದು ದಾಖಲೆಯಲ್ಲಿದೆ.
ನಾರಾಯಣ ಗುರುಗಳು ಎಂದೂ ಹಿಂದೂ ಧರ್ಮವನ್ನು ಪೆರಿಯಾರ್, ಅಂಬೇಡ್ಕರ್‍ರವರಂತೆ ಸಾರಾಸಗಟಾಗಿ ತಿರಸ್ಕರಿಸಲಿಲ್ಲ. ಅವರು ತಮ್ಮ ಜೀವನದುದ್ದಕ್ಕೂ ಧಾರ್ಮಿಕ ಪುನರುತ್ಥಾನದ ಬಗ್ಗೆ ಮಾತನಾಡುತ್ತಿದ್ದರು. ಇಲ್ಲಿ ದೇವನೂರು ಮಹಾದೇವ ಅವರ ಮಾತೊಂದು ನೆನಪಿಗೆ ಬರುತ್ತದೆ.

ಹಿಂದೂ ಧರ್ಮ ಎಂಬ ಮನೆಯೊಳಗೆ ಭಿನ್ನವಾದ ಜಾತಿ ತಾರತಮ್ಯದ ಕಂಬಗಳನ್ನು ಒಳಗೊಳಗೆ ಕುಯ್ಯುವಂತೆ ಗಾಂಧೀಜಿ ಕಾಣಿಸಿದರೆ, ಅಂಬೇಡ್ಕರ್ ಹೊರಗಿನಿಂದ ಆ ಅಸಮಾನತೆಯ ಮನೆಗೆ ಕಲ್ಲೆಸೆಯುವಂತೆ ಕಾಣುತ್ತಾರೆ ಎಂದು ಗಾಂಧೀ ಮತ್ತು ಅಂಬೇಡ್ಕರ್ ಅವರ ಸೈದ್ಧಾಂತಿಕ ಸಂಘರ್ಷವನ್ನು ಪ್ರಸ್ತಾಪಿಸುತ್ತಾ ದೇವನೂರು ಹೇಳುತ್ತಾರೆ.

ಗಾಂಧೀ ಆ ಕೆಲಸ ಮಾಡಿರುವ ಬಗ್ಗೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ನಾರಾಯಣ ಗುರುಗಳ ಧಾರ್ಮಿಕ ಸುಧಾರಣಾವಾದಿ ಚಳವಳಿ ಮಾತ್ರ ಈ ಕಂಬ ಕುಯ್ಯುವ ಕೆಲಸವನ್ನು ಮಾಡಿದೆ. ಅವರದ್ದು ಸಂಘರ್ಷದ ಹಾದಿಯಾಗಿರಲಿಲ್ಲ. ಅವರ ಹೋರಾಟದ ಎಲ್ಲಾ ಕಾರ್ಯತಂತ್ರಗಳನ್ನು ಅವಲೋಕಿಸುತ್ತಾ ಬಂದರೆ, ಅವರಲ್ಲೊಬ್ಬ ಚತುರ ರಾಜಕಾರಣಿ ಇದ್ದನೆಂಬುದು ಸ್ಪಷ್ಟವಾಗುತ್ತದೆ. ಅವರು ಸಮಾಜ ಸುಧಾರಕನ ಕೆಲಸ ಮಾಡಲಿಕ್ಕೆಂದೇ ಸನ್ಯಾಸಿಯ ಪಾತ್ರವನ್ನು ಧರಿಸಿದರೇನೋ ಎಂಬ ಅನುಮಾನ ಬರುತ್ತದೆ. ಕೋಮುವಾದಿ ರಾಜಕಾರಣವನ್ನು ಎದುರಿಸಲು ಇಂದು ಬೇಕಾಗಿರುವುದು ಇಂತಹ ನಾಯಕತ್ವ.
ಅವರು ದೇವಸ್ಥಾನ ಪ್ರವೇಶಾವಕಾಶದ ಬಗ್ಗೆ ಎಂದೂ ಗಂಭೀರವಾಗಿ ಪ್ರಯತ್ನ ನಡೆಸಲಿಲ್ಲ. ಅವರು ಸಾವಿನ ಎಂಟು ವರ್ಷಗಳ ನಂತರ ಕೇರಳ ಸರಕಾರ ದೇವಾಲಯ ಪ್ರವೇಶ ಘೋಷಣೆಯನ್ನು ಹೊರಡಿಸಿತ್ತು. ಆಗಲೇ ನಾರಾಯಣ ಗುರುಗಳು ಕೇರಳ, ಮದ್ರಾಸ್ ಮತ್ತು ಮಂಗಳೂರಿನಲ್ಲಿಯೂ ದೇವಸ್ಥಾನಗಳನ್ನು ಸ್ಥಾಪಿಸಿದ್ದರು. ನೂರಾರು ಗುರುಮಂದಿರ ಹಾಗೂ ಆಶ್ರಮಗಳು ಪ್ರಾರಂಭವಾಗಿದ್ದವು.

ದೇವಸ್ಥಾನಗಳ ಬಗೆಗಿನ ಅವರ ಪರಿಕಲ್ಪನೆಯೇ ಕ್ರಾಂತಿಕಾರಿಯಾದುದು. ಅರವಿಪುರಂನಲ್ಲಿ ಲಿಂಗಸ್ಥಾಪನೆ ಮಾಡಿದ ಗುರುಗಳು ತಮ್ಮ ಕೊನೆಯ ಪ್ರತಿಷ್ಠಾಪನೆಯನ್ನು ಕಳವಂ ಕೋಡಂ ನಲ್ಲಿ ಕನ್ನಡಿಯೊಂದನ್ನು ಸ್ಥಾಪಿಸುವ ಮೂಲಕ ನಡೆಸಿದರು. ಅದರ ನಡುವೆ ಒಂದೆಡೆ ಸತ್ಯ, ಧರ್ಮ, ಶಾಂತಿ, ದಯೆ ಎಂಬ ಸಂದೇಶವನ್ನು ಸಾರುವ ಸಲಕವನ್ನಷ್ಟೇ ಸ್ಥಾಪಿಸಿದರೆ, ಕರಮಕ್ಕು ಎಂಬಲ್ಲಿ ನಂದಾ ದೀಪವನ್ನಷ್ಟೇ ಹಚ್ಚಿದರು. ಕೊನೆಗಾಲದಲ್ಲಿ ಶಿವಗಿರಿಯಲ್ಲಿ ಅವರ ಚಿಂತನೆಯ ಮೂಲಧಾತುವಾದ ಅರಿವು ಸಂಕೇತವಾಗಿ ಸರಸ್ವತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿದರೆ, ಶಂಕರಾಚಾರ್ಯರು ಹುಟ್ಟೂರಿಗೆ ಸಮೀಪದ ಅಲ್ವಾಯಿನಲ್ಲಿ ನಿರ್ಮಿಸಿದ ಅದ್ವೆತಾಶ್ರಮದಲ್ಲಿ ಮೂರ್ತಿಯನ್ನೇ ಸ್ಥಾಪಿಸಲಿಲ್ಲ. ಕೊನೆಗಾಲದಲ್ಲಿ ದೇವಸ್ಥಾನಗಳ ಸ್ಥಾಪನೆ ನಿಲ್ಲಿಸಿ ಎಂದು ಅನುಯಾಯಿಗಳಿಗೆ ಕರೆ ನೀಡಿದರು.

ನಾರಾಯಣ ಗುರುಗಳು ತಮ್ಮ ಚಳವಳಿ ಉದ್ದಕ್ಕೂ ದೇವಾಲಯಗಳನ್ನು ಸಾಮಾಜಿಕ ಪರಿವರ್ತನೆಯ ಸಾಧನವಾಗಿ ಬಳಸುತ್ತಾ ಬಂದುದ್ದನ್ನು ಕಾಣಬಹುದು. ಅದು ಸನಾತನ ಧರ್ಮಾವಲಂಭಿಗಳ ಆಶಯಕ್ಕೆ ತದ್ವಿರುದ್ದವಾದದು. ದೇವಾಲಯಗಳ ಪೂಜೆ-ಹವನ-ಹೋಮಗಳಲ್ಲಿ ಮುಳುಗಿ ವ್ಯಾಪಾರಿ ಕೇಂದ್ರಗಳಾಗುವ ಬದಲಿಗೆ ಅವುಗಳನ್ನು ಸಾಮೂಹಿಕ ಪ್ರಾರ್ಥನಾ ಮಂದಿರವಾಗಿ ಉಳಿಸಬೇಕೆಂದು ಅವರು ಬಯಸಿದ್ದರು. ಈ ದೃಷ್ಟಿಯಿಂದ ಅವರ ದೇವಾಲಯದ ಪರಿಕಲ್ಪನೆ ಮಸೀದಿ, ಚರ್ಚುಗಳಿಗೆ ಹೆಚ್ಚು ಹತ್ತಿರವಾಗಿತ್ತು. ದೇವಸ್ಥಾನಗಳ ಭಕ್ತಿ ಪೀಠವಾಗುವದರ ಜೊತೆಯಲ್ಲಿ ಅಧ್ಯಯನ ಕೇಂದ್ರವಾಗಬೇಕು. ಉದ್ಯಾನ, ವಾಚನಾಲಯಗಳನ್ನೊಳಗೊಂಡು ಅವು ಸ್ವಚ್ಛ ಪರಿಸರದಲ್ಲಿ ನಿರ್ಮಾಣಗೊಳ್ಳಬೇಕು ಎಂದು ಅವರು ಹೇಳುತ್ತಿದ್ದರು. ಅವರು ಸ್ಥಾಪಿಸಿದ ಎಲ್ಲಾ ದೇವಾಲಯಗಳು ಈ ಅಭಿಪ್ರಾಯವನ್ನೇ ಬಿಂಬಿಸುತ್ತದೆ.

ನಾರಾಯಣ ಗುರುಗಳದ್ದು ಮುಖಾಮುಖಿ ಹೋರಾಟವಲ್ಲ. ಅವರು ವೈದಿಕಶಾಹಿ ಏಕಸ್ವಾಮ್ಯಕ್ಕೆ ನೇರ ಸವಾಲು ಹಾಕಲಿಲ್ಲ. ಅದರ ಬದಲಿಗೆ ವೈದಿಕ ಆಧಿಪತ್ಯದ ಬೇರುಗಳನ್ನೇ ಅಲ್ಲಾಡಿಸಿದರು. ಸಂಸ್ಕøತವನ್ನು ಸಂಪೂರ್ಣವಾಗಿ ತಿರಸ್ಕರಿಸದೇ ಅದನ್ನು ಅಧ್ಯಯನ ಮಾಡಿ ಶೂದ್ರರೂ ಅದನ್ನು ಕಲಿತು ಅರಗಿಸಿಕೊಳ್ಳಬಹುದು ಎಂದು ತೋರಿಸಿಕೊಟ್ಟರು. ವೇದಾಧ್ಯಯನಕ್ಕೆ ಜಾತಿ ಅಸ್ಪಶ್ಯವಲ್ಲ ಎಂದು ಸಾರಿದ ಗುರುಗಳು ಶಂಕರಾಚಾರ್ಯರ ಅದ್ವೈತ ವೇದಾಂತವನ್ನು ಕಲಿತರು. ಆತ್ಮೋಪದೇಶ ಶತಕಂ ಸೇರಿದಂತೆ ಹಲವಾರು ಸಂಸ್ಕøತ ಗ್ರಂಥಗಳನ್ನು ಬರೆದರು. ಬ್ರಹ್ಮಸೂತ್ರದ ವಿಶ್ಲೇಷಣೆ ಮಾಡಿದ ಮೊದಲ ಅಸ್ಪೃಶ್ಯ ಅವರು.

ದೇವಸ್ಥಾನಗಳಷ್ಟೇ ಸ್ಥಾಪಿಸದೆ ಅಲ್ಲಿ ಅರ್ಚಕರಾಗಿ ಕೆಳವರ್ಗದ ಜಾತಿ ಜನರನ್ನೇ ನೇಮಿಸಿದರು. ಅವರ ತರಬೇತಿಗಾಗಿ ಶಿವಗಿರಿಯಲ್ಲಿ ಬ್ರಹ್ಮ ಮೀಮಾಂಸ ಶಾಲೆಗಳನ್ನು ತೆರೆದು ಬ್ರಹ್ಮ ವಿದ್ಯೆ ಕಲಿಸಿದರು. ಅವರಿಂದ ಸ್ಥಾಪನೆಗೊಂಡ ಬ್ರಹ್ಮ ವಿದ್ಯಾ ಕೇಂದ್ರದಲ್ಲಿ ಈಳವರಲ್ಲದೆ, ಪುಲಯ, ಪರಯ ಮೊದಲಾದ ಇ£್ನತರ ಕೆಳಜಾತಿಯ ಜನರಲ್ಲದೆ, ಮುಸ್ಲಿಂ ಮತ್ತು ಕ್ರಿಶ್ಚಿಯನ್ನರೂ ಆಗಮಶಾಸವನ್ನೊಳಗೊಂಡಂತೆ ವೇದಾಧ್ಯಯನ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಲ್ಲವರ ಜಾತಿಯ ಮದುವೆಯನ್ನು ಬಿಲ್ಲವ ಅರ್ಚಕರೇ ಮಾಡುತ್ತಿದ್ದಾರೆ. ಅವರೆಲ್ಲರೂ ಮೂಲತಃ ಶಿವಗಿರಿಯಲ್ಲಿ ತರಬೇತಿ ಪಡೆದವರು. ಆದರೆ, ಈಗ ಬಿಲ್ಲವ ಸಮುದಾಯದಲ್ಲಿಯೂ ಬೆಳೆಯುತ್ತಿರುವ ನವಬ್ರಾಹ್ಮಣರಿಗೆ ಬಿಲ್ಲವ ಅರ್ಚಕರು ಪಥ್ಯವಾಗುವುದಿಲ್ಲ ಎಂಬುದು ಬೇರೆ ಮಾತು.

ಅರವಿಪುರಂನಲ್ಲಿ ದೇವಾಲಯ ಸ್ಥಾಪನೆ ನಂತರ 1961 ರಲ್ಲಿ ‘ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ’ ಸ್ಥಾಪನೆಯಾಗುವ ವರೆಗೆ ಕೇರಳ ರಾಜ್ಯ ಮಾತ್ರವಲ್ಲ ತಮಿಳುನಾಡು ಮತ್ತು ಮಂಗಳೂರಿಗೂ ಭೇಟಿ ನೀಡಿ ದೇವಾಲಯಗಳನ್ನು ಸ್ಥಾಪಿಸಿದರು. ಕೆಳವರ್ಗದ ಜನರಲ್ಲಿದ್ದ ಮೂಡನಂಬಿಕೆ ಮತ್ತು ದುಂದುವೆಚ್ಚದ ಅಂಧ ಸಂಪ್ರದಾಯಗಳನ್ನು ಕಿತ್ತೊಗೆಯಲು ಹೋರಾಟ ನಡೆಸಿದರು. ವಿವಾಹಗಳನ್ನು ಸರಳಗೊಳಿಸಿದರು. ವಿವಾಹಕ್ಕೆ ಮಾಡುವ ದುಂದು ವೆಚ್ಚಗಳನ್ನು ವೃದ್ಧಾಪ್ಯದ ದಿನಗಳಿಗಾಗಿ ಉಳಿತಾಯ ಮಾಡುವಂತೆ ಸಲಹೆ ನೀಡಿದರು. ಸಹಭೋಜನಕ್ಕೆ ಪ್ರೋತ್ಸಾಹ ನೀಡಿದರು. ‘ಮದ್ಯವನ್ನು ಮಾಡಬೇಡಿ, ಮಾರಬೇಡಿ ಮತ್ತು ಕುಡಿಯಬೇಡಿ’ ಎಂದು ಹೇಳುವ ಮೂಲಕ ಮದ್ಯಪಾನದ ವಿರುದ್ಧ ವ್ಯಾಪಕ ಚಳವಳಿಯನ್ನೇ ನಡೆಸಿದರು.

ಇದರಿಂದ ಸಾಂಪ್ರದಾಯಿಕವಾಗಿ ಸೇಂದಿ ತೆಗೆಯುವ ವೃತ್ತಿಯನ್ನು ಮಾಡುತ್ತಿದ್ದ ಈಳವರು ಆ ವೃತ್ತಿಯನ್ನು ತ್ಯಜಿಸಿ, ಬೇರೆ ವೃತ್ತಿ ಕೈಗೆತ್ತಿಕೊಳ್ಳುವಂತಾಯಿತು. ಈ ಎಲ್ಲಾ ಸುಧಾರಣೆಗಳನ್ನು ಅವರು ಮೊದಲು ತಮ್ಮ ಶ್ರೀಮಂತ ಅನುಯಾಯಿಗಳ ಮನೆಯಲ್ಲಿಯೇ ಮಾಡಿದರು. ‘ತಾಳಿಕೆಟ್ಟು’, ‘ತಿರುಂಡಕಳಿ’ ಮೊದಲಾದ ಅಂಧಸಂಪ್ರದಾಯಗಳನ್ನು ಆಚರಿಸುವ ಮತ್ತು ಆಡಂಬರದ ಮದುವೆಗಳನ್ನು ಮಾಡುವ ಶ್ರೀಮಂತ ಅನುಯಾಯಿಗಳ ಮನೆಗಳನ್ನೇ ಬಹಿಷ್ಕರಿಸಿದರು.

1916ರಲ್ಲಿ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ ಸ್ಥಾಪನೆಯ ಮೂಲಕ ನಾರಾಯಣ ಗುರು ಚಳವಳಿ ಸಂಘರ್ಷದ ಹಾದಿಗೆ ಇಳಿಯಿತು. ಆಗ ಅವರಿಗೆ ಜೊತೆಯಾದವರು ಡಾ.ಪಲ್ಪು, ಪಲ್ಪು ಮತ್ತು ಅವರಣ್ಣ ವೇಲು ಇಬ್ಬರೂ ಕೇರಳದ ಜಾತಿ ವ್ಯವಸ್ಥೆಗೆ ಬಲಿಯಾಗಿ ಹುಟ್ಟೂರಿನಲ್ಲಿ ಶಿಕ್ಷಣ ಮತ್ತು ಉದ್ಯೋಗ ಎರಡೂ ಸಿಗದೆ, ಊರು ಬಿಟ್ಟು ಹೋದವರು.ವೇಲು ಈಳವ ಜನಾಂಗದ ಮೊದಲ ಪದವೀಧರ. ಆತ ಮದ್ರಾಸ್‍ನಲ್ಲಿಯೇ ಕಲಿತು, ಅಲ್ಲಿಯೇ ಸರ್ಕಾರಿ ನೌಕರಿ ಸೇರಿದರೆ, ಪಲ್ಪು ಮದ್ರಾಸ್‍ನಲ್ಲಿ ಓದಿ ಮೈಸೂರಿನಲ್ಲಿ ಸರ್ಕಾರಿ ವೈದ್ಯರಾಗುತ್ತಾರೆ. ಈಳವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಬೇಕೆಂದು ಕೋರುವ ಮೊದಲ ಮನವಿಯನ್ನು ತಿರುವಾಂಕೂರಿನ ದಿವಾನರಿಗೆ ಅರ್ಪಿಸುವ ಮೂಲಕ ಡಾ.ಪಲ್ಪು ತನ್ನ ಹೋರಾಟ ಆರಂಭಿಸುತ್ತಾರೆ.

ತಿರುವಾಂಕೂರಿನ ದಿವಾನರು, ವೈಸ್‍ರಾಯ್, ಬ್ರಿಟಿಷ್ ಪಾರ್ಲಿಮೆಂಟ್, ಕಾಂಗ್ರೇಸ್ ಪಕ್ಷ ಹಾಗೂ ಇಂಗ್ಲೀಷ್ ದಿನಪತ್ರಿಕೆಗಳಿಗೆ ಈಳವರ ಸ್ಥಿತಿಯನ್ನು ಮನವರಿಕೆ ಮಾಡಿಕೊಡಲು ಅವರು ಸತತ ಪ್ರಯತ್ನ ನಡೆಸುತ್ತಾರೆ. ಅದಕ್ಕೆ ನಿರೀಕ್ಷಿತ ಫಲ ಸಿಗದಾಗ, ಬೆಂಗಳೂರಿನಲ್ಲಿ ಡಾ.ಪಲ್ಪು ಸ್ವಾಮಿ ವಿವೇಕಾನಂದರನ್ನು ಭೇಟಿಯಾಗುತ್ತಾರೆ. ಕೇರಳದ ಪರಿಸ್ಥಿತಿಯ ಸಂಪೂರ್ಣ ಅರಿವಿದ್ದ ವಿವೇಕಾನಂದರು “ಆದ್ಯಾತ್ಮಿಕ ನಾಯಕರೊಬ್ಬರ ನೇತೃತ್ವದಲ್ಲಿ ಸಾಮಾಜಿಕ ಚಳವಳಿಯನ್ನು ಹುಟ್ಟುಹಾಕಿದರೆ, ಮಾತ್ರ ಕೇರಳದಲ್ಲಿ ಪರಿವರ್ತನೆ ಸಾಧ್ಯ” ಎನ್ನುತ್ತಾರೆ. ಅಲ್ಲಿಂದ ಕೇರಳಕ್ಕೆ ಹಿಂದಿರುಗಿದ ಡಾ.ಪಲ್ಪು ನಾರಾಯಣ ಗುರುಗಳನ್ನು ಭೇಟಿ ಮಾಡುತ್ತಾರೆ.

ಈ ಭೇಟಿಗೆ ಐತಿಹಾಸಿಕ ಮಹತ್ವವಿದೆ. ಇಬ್ಬರ ಮಿಲನದಿಂದಲೇ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ ಸ್ಥಾಪನೆಯಾಗುತ್ತದೆ. ಈಳವರಲ್ಲಿ ‘ಧಾರ್ಮಿಕ ಮತ್ತು ಜಾತ್ಯಾತೀತ ಶಿಕ್ಷಣ ಹಾಗೂ ಉದ್ಯಮಶೀಲ ಮನೋಭಾವನೆ’ಯನ್ನು ಬೆಳೆಸುವುದು ಇದರ ಉದ್ದೇಶವಾಗಿತ್ತು. ಈ ಹಂತದಲ್ಲಿ ಕುಮಾರ ಆಶಾನ್ ಇವರಿಬ್ಬರ ಜೊತೆಯಾಗುತ್ತಾರೆ. ಮೂಲತಃ ಕವಿ ಮತ್ತು ಲೇಖಕನಾಗಿದ್ದ ಆಶಾನ್ ತನ್ನ ಕಾವ್ಯ ಪ್ರತಿಭೆ, ಬರಹ, ಭಾಷಣಗಳ ಮೂಲಕ ಚಳವಳಿಗೆ ಜೀವ ತುಂಬಿದರು. ಅವರ ಸಂಪಾದಕತ್ವದ ವಿವೇಕೋದಯಂ ಪತ್ರಿಕೆ ಚಳವಳಿಯ ಮುಖವಾಣಿಯಾಗಿತ್ತು.

ಎಸ್‍ಎನ್‍ಡಿಪಿ ನೇತೃತ್ವದಲ್ಲಿ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿನ ಅನ್ಯಾಯದ ವಿರುದ್ಧದ ಹೋರಾಟದ ಕಣಕ್ಕಿಳಿದ ಈಳವರು ಆಗಲೇ ಧಾರ್ಮಿಕ ಚಳುವಳಿಯಿಂದಾಗಿ ಸಾಕಷ್ಟು ಜಾಗೃತರಾಗಿದ್ದರು. ತಮ್ಮದೇ ದೇವಾಲಯಗಳು ಅವರ ಸಂಘಟನೆಗೆ ಶಕ್ತಿ ತುಂಬಿದ್ದವು. ಎಸ್‍ಎನ್‍ಡಿಪಿ ಕೈಗಾರಿಕಾ ಸಮ್ಮೇಳನ ಮತ್ತು ಮಹಿಳಾ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿತ್ತು. ಹಲವಾರು ಯುವಕರು ಮದ್ರಾಸ್ ಬೆಂಗಳೂರಿಗೆ ಹೋಗಿ ಇಂಗ್ಲೀಷ್ ಆಯುರ್ವೇದ ವ್ಯಾಸಾಂಗ ಮಾಡಿ ಬಂದಿದ್ದರು.

ನಾರಾಯಣ ಗುರುಗಳ ದೂರದರ್ಶಿತ್ವ ಮತ್ತು ಕಾರ್ಯತಂತ್ರ ಅರಿವಾಗುವುದು ಇಲ್ಲಿ. ದೇವಸ್ಥಾನ ಪ್ರವೇಶಕ್ಕೆ ಅವರು ಹೋರಾಟ ನಡೆಸಲಿಲ್ಲ. ಬದಲಿಗೆ ಅವರೇ ದೇವಸ್ಥಾನಗಳನ್ನು ಸ್ಥಾಪಿಸಿದರು. ಆದರೆ, ಶಾಲೆಗಳ ಸ್ಥಾಪನೆಗೆ ಆಡಳಿತದ ಅನುಮತಿ ಬೇಕಿತ್ತು. ಅದಕ್ಕಾಗಿ ಸರ್ಕಾರಿ ಶಾಲೆಗಳ ಪ್ರವೇಶದ ಹಕ್ಕಿನ ಹೋರಾಟಕ್ಕೆ ಅವರು ಚಾಲನೆ ನೀಡಿದರು. ಶಾಲೆಗಳ ಪ್ರವೇಶಕ್ಕಾಗಿ ಎಸ್‍ಎನ್‍ಡಿಪಿ ಹೋರಾಟ ಪ್ರಾರಂಭಿಸಿದರೂ ಅದು ಅಷ್ಟೊಂದು ಸರಳವಾಗಿರಲಿಲ್ಲ. ಈಳವರಲ್ಲಿ ಬೆಳೆಯುತ್ತಿರುವ ಜಾಗೃತಿ ನಂಬೂದಿರಿ ಮತ್ತು ನಾಯರ್ ಜನಾಂಗದಲ್ಲಿ ದ್ವೇಷದ ಕಿಚ್ಚು ಹತ್ತಿಸಿತ್ತು. ದೇವಸ್ಥಾನ ಸ್ಥಾಪನೆಯ ಕಾಲದಲ್ಲಿ ಎದುರಾಗದ ವಿರೋಧ ಈಗ ದಟ್ಟವಾಗತೊಡಗಿತ್ತು. ಎಸ್‍ಎನ್‍ಡಿಪಿ ಚಳವಳಿಯಲ್ಲಿ ಈ ಕಾಲ ನಿರ್ಣಾಯಕವಾದದ್ದು. ಆಗ ಎಲ್ಲೆಡೆ ನಾಯರ್-ಈಳವರ ಸಂಘರ್ಷ ನಡೆಯುತ್ತದೆ. ಈಳವರ ಮೇಲೆ ಬಹಿರಂಗವಾಗಿ ದೌರ್ಜನ್ಯವೆಸಗಲಾಗುತ್ತದೆ.

ಎಸ್‍ಎನ್‍ಡಿಪಿಯನ್ನು ಬೆಂಬಲಿಸುವ ಪತ್ರಿಕೆಗಳ ಕಚೇರಿಯನ್ನು ಸುಟ್ಟು ಹಾಕಲಾಗುತ್ತದೆ.
ಚಳವಳಿಯ ಒತ್ತಡಕ್ಕೆ ಮಣಿದ ತಿರುವಾಂಕೂರು ದಿವಾನರು ಈಳವರಿಗೆ ಅವರದ್ದೇ ಶಾಲೆಗಳನ್ನು ಸ್ಥಾಪಿಸಲು ಅನುಮತಿ ನೀಡುತ್ತಾರೆ. ಸರಕಾರಿ ಶಾಲೆಗಳಲ್ಲಿ ಎಲ್ಲಾ ಜಾತಿ ಜನರಿಗೆ ಮುಕ್ತ ಪ್ರವೇಶ ನೀಡುವ ಮಸೂದೆ ಜಾರಿಗೆ ಬರುತ್ತದೆ. ನಾರಾಯಣ ಗುರು ಚಳವಳಿಯಲ್ಲಿ ದೇವಸ್ಥಾನ ಸ್ಥಾಪನೆಗಿಂತಲೂ ಮುಖ್ಯವಾದ ಘಟನೆಯಿದು. ಇದು ಕುಮಾರ ಆಶಾನ್ ಮತ್ತು ಡಾ.ಪಲ್ಪು ಅವರ ನಾಯಕತ್ವದ ಜಯ. ಆದರೆ, ಸರ್ಕಾರಿ ಸೇವೆಗೆ ಹಿಂದುಳಿದ ಜಾತಿ ಸೇರುವ ಅವಕಾಶವನ್ನು ಕೊನೆಗೂ ತಮ್ಮ ಜೀವಮಾನದಲ್ಲಿ ನಾರಾಯಣ ಗುರುಗಳಿಗೆ ಕಾಣಲಾಗುವುದಿಲ್ಲ. 1936ರಲ್ಲಿ ಸರ್ಕಾರ ಲೋಕಸೇವಾ ಆಯೋಗವನ್ನು ಸ್ಥಾಪಿಸಿ, ಉನ್ನತ ಹುದ್ದೆಗಳನ್ನು ಹೊರತುಪಡಿಸಿ, ಹಿಂದುಳಿದವರಿಗೆ ಶೇ.40ರಷ್ಟು ಮೀಸಲಾತಿಯನ್ನು ನೀಡುತ್ತದೆ.
ಶಿಕ್ಷಣ ಮತ್ತು ಉದ್ಯೋಗದ ಕ್ಷೇತ್ರದಲ್ಲಿನ ಮೀಸಲಾತಿ ಈಳವ ಜನಾಂಗದಲ್ಲಿ ಎರಡೂ ವರ್ಗಗಳ ಬುದ್ಧಿಜೀವಿಗಳ ಸೃಷ್ಟಿಗೆ ಕಾರಣವಾಯಿತು. ಸಾಹಿತಿಗಳು, ಪತ್ರಕರ್ತರು, ಶಿಕ್ಷಕರು ಮತ್ತು ಧಾರ್ಮಿಕ ನಾಯಕರದ್ದು ಒಂದು ಗುಂಪಾದರೆ, ವೈದ್ಯರು, ವಕೀಲರು, ಉದ್ಯಮಿಗಳು, ಆಡಳಿತಾಧಿಕಾರಿಗಳು ಮತ್ತು ರಾಜಕಾರಣಿಗಳು ಇನ್ನೊಂದು ಗುಂಪಿನಲ್ಲಿದ್ದರು.

ಕೇರಳದಲ್ಲಿ ಶಿಕ್ಷಣದ ಪ್ರಸಾರದಲ್ಲಿ ಆರ್.ಶಂಕರ್ ಅವರದ್ದು ನಿರ್ಣಾಯಕ ಪಾತ್ರ. ಇವರು ಸ್ಥಾಪಿಸಿದ್ದ “ಶ್ರೀ ನಾರಾಯಣ ಟ್ರಸ್ಟ್” 1952ರಲ್ಲಿಯೇ ನೂರಾರು ಶಾಲೆ, ಪಾಲಿಟೆಕ್ನಿಕ್, ಶಿಕ್ಷಕ ತರಬೇತಿ ಸಂಸ್ಥೆ ಮತ್ತು ಆಸ್ಪತ್ರೆಗಳನ್ನು ಹೊಂದಿದ್ದವು. ವಾಣಿಜ್ಯ ಮತ್ತು ಉದ್ಯಮ ಕ್ಷೇತ್ರದಲ್ಲಿ ಈಳವರು ಅಭಿವೃದ್ಧಿ ಹೊಂದಿದ್ದರು. ಎಸ್‍ಎನ್‍ಡಿಯ ಮೊದಲ ಅಧಿವೇಶನದ ಕಾಲದಲ್ಲಿಯೇ ನಾರಾಯಣ ಗುರುಗಳು ಕೈಗಾರಿಕಾ ಸಮ್ಮೇಳನವನ್ನು ನಡೆಸಿದ್ದರು. ಆನಂತರ ಅದು ವಾರ್ಷಿಕ ಕಾರ್ಯಕ್ರಮವಾಯಿತು. ತೆಂಗಿನನಾರು ಉದ್ದಿಮೆ ಜನಪ್ರಿಯವಾಗತೊಡಗಿದ್ದು ಅದೇ ಕಾಲದಲ್ಲಿ. ಪ್ರತಿ ದೇವಾಲಯ, ಆಶ್ರಮ ಮತ್ತು ಮಂದಿರಗಳಲ್ಲಿ ತೆಂಗು ನಾರಿನ ಉದ್ದಿಮೆಯ ಘಟಕಗಳನ್ನು ಸ್ಥಾಪಿಸುವಂತೆ ಅವರು ಪ್ರೇರೆಪಿಸಿದ್ದರು. ಈಗ ತೆಂಗುನಾರಿನ ಉದ್ದಿಮೆಯಲ್ಲಿ ಕೇರಳ ದೇಶದಲ್ಲಿಯೇ ಏಕಸ್ವಾಮ್ಯವನ್ನು ಪಡೆದಿದೆ.

ಈ ಹಂತದಲ್ಲಿ ಎಸ್‍ಎನ್‍ಡಿಪಿ ಮುಂದಿನ ಹೋರಾಟವನ್ನು ರಾಜಕೀಯ ಪ್ರಾತಿನಿದ್ಯಕ್ಕಾಗಿ ಕೇಂದ್ರಿಕರಿಸುತ್ತದೆ. ಈ ಹೋರಾಟದಲ್ಲಿ ಅವರಿಗೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಾಂಗಗಳು ಜೊತೆಯಾಗುತ್ತವೆ. ಈ ಮೂರು ಜನಾಂಗಗಳ ಒಟ್ಟು ಜನಸಂಖ್ಯೆ ತಿರುವಾಂಕೂರು ಸಂಸ್ಥಾನದ ಜನಸಂಖ್ಯೆಯ ಮೂರನೇ ಎರಡರಷ್ಟಿತ್ತು. ತಿರುವಾಂಕೂರು ಸಂಸ್ಥಾನದಲ್ಲಿ 1888ರಲ್ಲಿಯೇ ವಿಧಾನಸಭೆ ರಚನೆಯಾಗಿ ಚುನಾವಣೆಗಳು ನಡೆಯುತ್ತಾ ಬಂದಿದ್ದರೂ, 1935ರವರೆಗೆ ನಡೆದ 15 ಚುನಾವಣೆಗಳಲ್ಲಿ ಶೇ.26ರಷ್ಟಿದ್ದ ಈಳವರಲ್ಲಿ ಒಬ್ಬರೂ ಕೂಡ ಆಯ್ಕೆಯಾಗಿರಲಿಲ್ಲ. ಶೇ.22ರಷ್ಟಿದ್ದ ಕ್ರಿಶ್ಚಿಯನ್‍ರು ಮತ್ತು ಶೇ.18ರಷ್ಟಿದ್ದ ಮುಸ್ಲಿಂರ ಪ್ರಾತಿನಿಧ್ಯ ಮೂರು-ನಾಲ್ಕರ ಗಡಿ ದಾಟಿರಲಿಲ್ಲ.

ಐದು ರೂ. ತೆರಿಗೆ ನೀಡುವವರು ಮಾತ್ರ ಮತದಾನದ ಹಕ್ಕು ಪಡೆದಿರುವುದು ಈ ಅನ್ಯಾಯಕ್ಕೆ ಕಾರಣವಾಗಿತ್ತು. ಆ ಕಾಲದ ಭೂಒಡೆತನ ಬಹುಪಾಲು ನಾಯರ್ ಮತ್ತು ನಂಬೂದಿರಿಗಳ ಕೈಯಲ್ಲಿದ್ದ ಕಾರಣ ಉಳಿದ ಜನಾಂಗ ಮತದಾನದ ಹಕ್ಕನ್ನೇ ಪಡೆಯುವುದು ಅಸಾಧ್ಯವಾಗಿತ್ತು. ಇದನ್ನು ಪ್ರತಿಭಟಿಸಲೆಂದೇ ಮೂರು ಜನಾಂಗಗಳು ಕೂಡಿ “ಸಂಯುಕ್ತ ರಾಜಕೀಯ ಸಂಘಟನೆ”ಯನ್ನು ರಚಿಸಿಕೊಂಡು 1935ರ ಚುನಾವಣೆಯನ್ನು ಬಹಿಷ್ಕರಿಸಿತ್ತು. ಈ ಹೋರಾಟಕ್ಕೆ ಮಣಿದ ತಿರುವಾಂಕೂರು ಸಂಸ್ಥಾನ ಜಾತಿ ಪ್ರಮಾಣಕ್ಕೆ ಅನುಗುಣವಾಗಿ ರಾಜಕೀಯ ಮೀಸಲಾತಿ ಘೋಷಿಸಿತು. ಕೇರಳದಲ್ಲಿ ಇಂದು ನಾವು ಕಾಣುತ್ತಿರುವ ರಾಜಕೀಯ ಜಾಗೃತಿಗೆ ಇದು ಮೂಲ ಕಾರಣ.
ಕೇರಳದ ಕಮ್ಯೂನಿಸ್ಟ್ ಪಕ್ಷವನ್ನು ನಾರಾಯಣ ಗುರು ಚಳವಳಿಯ ಮುಂದುವರೆದ ಭಾಗವೆನ್ನಬಹುದು. ಅಧಿಕೃತವಾಗಿ ನಾರಾಯಣ ಗುರು ಚಳವಳಿಗೆ ಎಸ್‍ಎನ್‍ಡಿಪಿಯೇ ಉತ್ತರಾಧಿಕಾರವನ್ನು ಪಡೆದಿದ್ದರೂ ಅದು ಕಮ್ಯೂನಿಸ್ಟ್ ಚಳವಳಿಗೆ ನಾಂದಿಯಾಗಿದ್ದನ್ನು ಇತಿಹಾಸ ಹೇಳುತ್ತದೆ.

ಈ ಬೆಳವಣಿಗೆಗೆ ಮುಖ್ಯವಾಗಿ ಕಾರಣಕರ್ತರಾದವರು ಸಹೋದರ ಅಯ್ಯಪ್ಪನ್.ಪ್ರಗತಿಪರ ಚಿಂತನೆಯ, ನೇರನಡೆನುಡಿಯ ಅಯ್ಯಪ್ಪನ್ ಹುಟ್ಟಿನಿಂದಲೇ ಹೋರಾಟಗಾರ ಮತ್ತು ಅಪ್ರತಿಮ ಧೈರ್ಯಶಾಲಿ. ಜಾತಿ ಶ್ರೇಣಿಯಲ್ಲಿ ಈಳವರಿಗಿಂತ ಕೆಳಗಿದ್ದ ಪುಲಯರ ಜೊತೆ ತಮ್ಮೂರಿನಲ್ಲಿ ಸಹಭೋಜನ ಮಾಡಿಸಿ ಜಾತಿಯಿಂದ ಬಹಿಷ್ಕøತನಾದ ಅಯ್ಯಪ್ಪನ್ ಜಾತಿ ನಿರ್ಮೂಲನೆಯ ಪ್ರಬಲ ಪ್ರತಿಪಾದಕ. ಅಯ್ಯಪ್ಪನ್ ಅವರನ್ನು ಗುರುತಿಸಿದ ಗುರುಗಳು ಅವರನ್ನು ತನ್ನ ಉತ್ತರಾಧಿಕಾರಿಯನ್ನಾಗಿ ಮಾಡುವ ಉದ್ದೇಶ ಹೊಂದಿದ್ದರಂತೆ. ಮೂಲತಃ ನಾಸ್ತಿಕನಾದ ಅಯ್ಯಪ್ಪನ್ “ಸ್ವತಂತ್ರ ಸಮುದಾಯ ಪ್ರತಿಷ್ಠಾನ”ವನ್ನು ಸ್ಥಾಪಿಸಿ ಸಹೋದರ ಎನ್ನುವ ಪತ್ರಿಕೆ ಪ್ರಾರಂಭಿಸಿ ಜಾತಿ ವಿನಾಶ ಚಳವಳಿಯನ್ನು ನಡೆಸುತ್ತಿದ್ದರು. ಅವರನ್ನು ಪುಲಯರ ಅಯ್ಯಪ್ಪನ್ ಎಂದು ಜನ ಗೇಲಿ ಮಾಡುತ್ತಿದ್ದರಂತೆ.

ನಾರಾಯಣ ಗುರುಗಳ ಸಾವಿನ ನಂತರ ಪರಸ್ಪರ ಭಿನ್ನ ವಿಚಾರಧಾರೆಯನ್ನು ಹೊಂದಿದ್ದ ನಾಯಕರು ಎಸ್‍ಎನ್‍ಡಿಪಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪ್ರಯತ್ನ ಪಟ್ಟಿದ್ದರು. ಮೊದಲನೆಯದಾಗಿ ಮೇಲ್ಜಾತಿ ಜನರ ವೈರಿ ಎಂದು ಬಗೆಯಲಾದ ಬ್ರಿಟಿಷರನ್ನು ಸ್ನೇಹಿತರೆಂದು ತಿಳಿದುಕೊಂಡಿದ್ದ ಮಿತವಾದಿ ಕೃಷ್ಣನ್, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸುವ ಮೂಲಕವೇ ಈಳವರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕೆಂದು ಹೇಳುತ್ತಿದ್ದ ಕಾಂಗ್ರೇಸ್ ಒಲವಿನ ಟಿ.ಕೆ ಮಾಧವನ್ ಮತ್ತು ಸಿ.ಕೇಶವನ್, ಸಮಾಜವಾದಿ ಮತ್ತು ಪುರೋಗಾಮಿ ವಿಚಾರಧಾರೆಯ ಸಹೋದರ ಅಯ್ಯಪ್ಪನ್ ಅವರ ಸಮಾಜವಾದಿ-ಪುರೋಗಾಮಿ ವಿಚಾರಧಾರೆಗಳನ್ನು ಮೇಳೈಸಲು ಯತ್ನಿಸುತ್ತಿದ್ದ ಇನ್ನೊಂದು ಗುಂಪು ಇದರಲ್ಲಿ ಪ್ರಮುಖವಾದವುಗಳು. ಈ ಕೊನೆಯ ಗುಂಪು ನಂತರದ ದಿನಗಳಲ್ಲಿ ಕಮ್ಯೂನಿಸ್ಟ್ ಪಕ್ಷ ಅಸ್ತಿತ್ವಕ್ಕೆ ಬರಲು ಕಾರಣವಾಯಿತು.

1937ರಲ್ಲಿ ಕೇರಳದಲ್ಲಿ ಕಮ್ಯೂನಿಷ್ಟ ಪಕ್ಷ ಪಿ.ಕೃಷ್ಣಪಿಳ್ಳೆ ಮತ್ತು ಇ.ಎಂ.ಎಸ್ ನಂಬೂದಿರಿ ಪಾಡ್ ನೇತೃತ್ವದಲ್ಲಿ ಸ್ಥಾಪನೆಯಾಯಿತು. ಎಸ್‍ಎನ್‍ಡಿಪಿಯ ಅಯ್ಯಪ್ಪನ್, ದಾಮೋದರನ್, ಸುಕುಮಾರನ್ ಮೊದಲಾದವರು ಕಮ್ಯೂನಿಸ್ಟ್ ಪಕ್ಷವನ್ನು ಬೆಂಬಲಿಸುತ್ತಿದ್ದರೆ ಸಿ.ಕೇಶವನ್, ಟಿ.ಕೆ ಮಾಧವನ್ ಮತ್ತು ಆರ್.ಶಂಕರ್ ಕಾಂಗ್ರೇಸ್ ಒಲವುಳ್ಳವರಾಗಿದ್ದರು. ವಿಪರ್ಯಾಸವೆಂದರೆ ಎಸ್.ಎನ್.ಡಿ.ಪಿ ಚಳವಳಿಯಿಂದ ಜಾಗೃತರಾದ ಕೆಳವರ್ಗದ ಜನಸಮೂಹ ಎಡಪಕ್ಷಗಳ ಕಡೆ ಆಕರ್ಷಿತರಾಗಿದ್ದರು. ಅವರಲ್ಲಿ ಭೂ ಹೀನ ಕಾರ್ಮಿಕರು, ಗೇಣಿದಾರರು, ಸೇಂದಿ ತೆಗೆಯುವವರು, ಪ್ಲಾಂಟೇಷನ್ ಕಾರ್ಮಿಕರು, ಗೇರುಬೀಜ ಕಾರ್ಖಾನೆ ಕಾರ್ಮಿಕರು ಮೊದಲಾದವರಿದ್ದರು. ಆ ವರ್ಗಗಳಲ್ಲಿ ಸಕ್ರಿಯವಾಗಿದ್ದ ಕಾರ್ಮಿಕರ ಸಂಘಟನೆಗಳು ಮಾತ್ರ ಕಮ್ಯೂನಿಸ್ಟ್ ಪಕ್ಷಕ್ಕೆ ಸೇರಿದ್ದಾಗಿತ್ತು.
ಕಮ್ಯೂನಿಷ್ಟ್ ಪಕ್ಷದಲ್ಲಿ ನಾಯಕತ್ವ ಮಾತ್ರ ಈಳವ, ಪುಲಯ, ಪರವರ ಕೈಗೆ ಬರಲಿಲ್ಲ. ಅದು ನಂಬೂದಿರಿ, ನಾಯರ್ ಕೈಯಲ್ಲಿ ಭದ್ರವಾಗಿಯೇ ಉಳಿದಿದೆ.

ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಪಡೆದಿದ್ದ ಹಿರಿಯ ನಾಯಕಿ ಕೆ.ಆರ್ ಗೌರಿ ಅವಕಾಶವಂಚಿತರಾಗಿದ್ದು ಇದಕ್ಕೆ ಒಂದು ಉದಾಹರಣೆ ಕಾಂಗ್ರೇಸ್ ಪಕ್ಷವು ಈಳವರಿಗೆ ರಾಜಕೀಯ ಅಧಿಕಾರವನ್ನು ನೀಡಿತು. 1951ರ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದಾಗ ಸಿ.ಕೇಶವನ್ ಮುಖ್ಯಮಂತ್ರಿಯಾದರು. 1962ರಲ್ಲಿ ಆರ್. ಶಂಕರ್ ಮುಖ್ಯಮಂತ್ರಿಯಾದರು. 1971ರಲ್ಲಿ ಅಲ್ಲಿನ ವಿಧಾನಸಭೆಯಲ್ಲಿ 28 ಈಳವ ಶಾಸಕರಿದ್ದರು. ಇಂದು ಕೂಡಾ ಕೇರಳದಲ್ಲಿ ಎಸ್.ಡಿ.ಪಿ ಮತ್ತು ನಾರಾಯಣ ಗುರುಗಳು ಸ್ಥಾಪಿಸಿದ್ದ ದೇವಾಲಯಗಳು ಹಾಗೂ ಸನ್ಯಾಸಿ ಸಂಘದ ಮೇಲೆ ನಿಯಂತ್ರಣ ಸ್ಥಾಪಿಸಲು ಕಾಂಗ್ರೇಸ್ ಮತ್ತು ಎಡಪಕ್ಷಗಳ ನಡುವೆ ಸಂಘರ್ಷ ನಡೆಯುತ್ತಿದೆ. ಎಸ್.ಎನ್.ಡಿ.ಪಿ, ಶ್ರೀ ನಾರಾಯಣ ಟ್ರಸ್ಟ್ ಮತ್ತು ಸನ್ಯಾಸಿ ಸಂಘ ಇಂದು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಹೊಂದಿದೆ.

ಮೇಲ್ಜಾತಿ ಜನರೂ ಸೇರಿದಂತೆ, ಎಲ್ಲ ವರ್ಗಗಳೊಳಗಿನಿಂದಲೂ ಸುಧಾರಣೆಯ ಧ್ವನಿ ಏಳುವಂತೆ ಮಾಡಿದ್ದು ನಾರಾಯಣಗುರು ಚಳವಳಿಯ ಇನ್ನೊಂದು ಸಾಧನೆ. ನಾಯರ್ ಸೇವಾ ಸಂಘ, ಪುಲಯ ಮಹಾಜನ ಸಭಾ ಮತ್ತು ನಂಬೂದಿರಿಗಳ ಯೋಗಕ್ಷೇಮ ಸಭಾಗಳು ಎಸ್.ಎನ್.ಡಿ.ಪಿ ಮಾದರಿಯಲ್ಲಿಯೇ ತಮ್ಮ ಜನಾಂಗಗಳ ಸುಧಾರಣೆಗೆ ಪ್ರಯತ್ನ ನಡೆಸಿದವು. ಸುಧಾರಣಾ ಚಳವಳಿಯಲ್ಲಿ ಭಾಗವಹಿಸಿದ್ದ ನಂಬೂದಿರಿ ಯುವಕರು ಬಹುಬೇಗನೆ ಕಮ್ಯೂನಿಸ್ಟ್ ಪಕ್ಷದತ್ತ ಆಕರ್ಷಿತರಾದರು. ಮುಂದೆ ಕಮ್ಯುನಿಸ್ಟ್ ಪಕ್ಷದ ನಾಯಕತ್ವ ನಂಬೂದಿರಿ, ನಾಯರ್‍ಗಳ ಪಾಲಾಗಿ ಇತಿಹಾಸ ಮರುಕಳಿಸಿದ್ದನ್ನು ಕಾಣಬಹುದು.

ನಾರಾಯಣ ಗುರು ಚಳವಳಿ ಕೇರಳದಲ್ಲಿ ನಡೆಯದೇ ಹೋಗಿದ್ದರೆ, ಏನಾಗುತ್ತಿತ್ತು ಎಂಬ ಪ್ರಶ್ನೆಗೆ ರಾಜಗೋಪಾಲಚಾರಿ ಅವರು ಆ ಚಳವಳಿ ನಡೆಯುತ್ತಿದ್ದ ಕಾಲದಲ್ಲಿಯೇ ಉತ್ತರ ನೀಡಿದ್ದರು. ತಿರುವಾಂಕೂರು ಸಂಸ್ಥಾನದ ದಿವಾನರು ದೇವಸ್ಥಾನ ಪ್ರವೇಶ ಘೋಷಣೆ ಹೊರಡಿಸಲು ವಿಳಂಬ ಮಾಡುತ್ತಿದ್ದನ್ನು ಕಂಡ ರಾಜಗೋಪಾಲಾಚಾರಿಯವರು ದಿವಾನರಿಗೆ ಪತ್ರ ಬರೆದು “ನಾರಾಯಣ ಗುರುಗಳ ಸುಧಾರಣಾ ಚಳವಳಿ ನಡೆಯದಿದ್ದರೆ, ಕೇರಳದಲ್ಲಿನ ಅರ್ಧಕ್ಕೂ ಹೆಚ್ಚಿನ ಜನಸಂಖ್ಯೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿ ಹೋಗುತ್ತಿದ್ದರು” ಎಂದು ಎಚ್ಚರಿಸಿದ್ದರು. ಕೇರಳದ ಆಗಿನ ಸ್ಥಿತಿಯಲ್ಲಿ ಈ ಎಚ್ಚರಿಕೆ ಉತ್ಪ್ರೇಕ್ಷೆ ಆಗಿರಲಿಲ್ಲ. ವಾಸ್ಕೋಡಗಾಮ ಮೊದಲು ಬಂದಿಳಿದ ಕೇರಳದಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಉಳಿದೆಲ್ಲಾ ಕಡೆಗಳಿಗಿಂತ ಹೆಚ್ಚು ಕ್ರೀಯಾಶೀಲವಾಗಿದ್ದವು. ನಾರಾಯಣಗುರುಗಳ ಪ್ರವೇಶವಾಗುವ ಮೊದಲು ಅಲ್ಲಿ ಜಾತಿ ಆಧಾರಿತ ದೌರ್ಜನ್ಯದಿಂದ ಬೇಸತ್ತ ಕೆಳವರ್ಗದ ಜನ ಸಾಮೂಹಿಕವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು. ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿದರೆ, ದೇಶದಲ್ಲಿ ಅತಿಹೆಚ್ಚು ಕ್ರಿಶ್ಚಿಯನ್ ಜನಸಂಖ್ಯೆ ಇರುವ ರಾಜ್ಯ ಕೇರಳ. ಅಲ್ಲಿ ಶೇ.24ರಷ್ಟು ಕ್ರಿಶ್ಚಿಯನ್‍ರು ಇರುವುದು ಈ ಮತಾಂತರಕ್ಕೆ ಸಾಕ್ಷಿ.

ನಾರಾಯಣ ಗುರುಗಳ ಚಳವಳಿಯುದ್ದಕ್ಕೂ ಹಲವಾರು ಬಾರಿ ತಮ್ಮ ಅನುಯಾಯಿಗಳಿಂದಲೆ ಮತಾಂತರದ ಬೆದರಿಕೆಯನ್ನು ಎದುರಿಸಿದ್ದರು. ವೈಕಂ ಸತ್ಯಾಗ್ರಹದ ಕಾಲದಲ್ಲಿ ಮತ್ತು ಅದಕ್ಕಿಂತ ಮೊದಲು ಮತಾಂತರದ ವಿಚಾರ ಮತ್ತೇ ಎಸ್.ಎನ್.ಡಿ.ಪಿಯಲ್ಲಿ ದೊಡ್ಡ ವಿವಾದ ಸೃಷ್ಟಿಸಿತ್ತು. ಗುರುಗಳ ಪ್ರಮುಖ ಶಿಷ್ಯರಲ್ಲಿ ಸಿ.ವಿ ಕುಂಜುರಾಮನ್ ಕ್ರಿಶ್ಚಿಯನ್ ಮತಾಂತರವನ್ನು ಪ್ರತಿಪಾದಿಸುತ್ತಿದ್ದರೆ, ಸಹೋದರ ಅಯ್ಯಪ್ಪನ್ ಮತ್ತು ಸಿ.ಕೃಷ್ಣನ್ ಬೌದ್ಧ ಧರ್ಮದ ಪರ ಒಲವು ತೋರಿಸಿದ್ದರು. ಕುಮಾರ ಆಶಾನ್ ಕೂಡ ಬೌದ್ಧ ಧರ್ಮದ ಕಡೆ ಆಕರ್ಷಿತರಾಗಿದ್ದರೂ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸಿರಲಿಲ್ಲ. ಟಿ.ಕೆ ಮಾಧವನ್ ಮತಾಂತರವನ್ನೇ ವಿರೋಧಿಸುತ್ತಿದ್ದರು.

ಎಸ್.ಎನ್.ಡಿ.ಪಿ ಅಸ್ತಿತ್ವವನ್ನೇ ಅಲುಗಾಡಿಸಿದ ಈ ವಿವಾದ ನಾರಾಯಣ ಗುರುಗಳಿಗೆ ಒಂದು ಸವಾಲಾಗಿತ್ತು. ತಕ್ಷಣ ಸ್ವಾಮಿಗಳು ಅಲ್ವಾಯಿಯಲ್ಲಿ 1924 ಪೆಬ್ರುವರಿಯಲ್ಲಿ ಎರಡು ದಿನಗಳ ಸರ್ವಧರ್ಮ ಸಮ್ಮೇಳನ ನಡೆಸಿದರು. ಈ ಸಮ್ಮೇಳನ ನಡೆಯುತ್ತಿರುವುದು “ತರ್ಕ ನಡೆಸುವದಕ್ಕಾಗಲಿ, ಗೆಲ್ಲುವುದಕ್ಕಾಗಲಿ ಅಲ್ಲ. ಪರಸ್ಪರ ತಿಳಿದುಕೊಳ್ಳುವುದು ಮತ್ತು ತಿಳಿಸಿಕೊಡುವುದು ಇದರ ಉದ್ದೇಶ” ಎಂದು ನಾರಾಯಣ ಗುರುಗಳು ಘೋಷಿಸಿದ್ದರು. ಸ್ವಾಮಿಗಳು “ಒಂದು ಜಾತಿ, ಒಂದು ಮತ, ಒಂದೇ ದೇವರು” ಎಂಬ ಸಂದೇಶ ಸಾರಿದರು. ಮನುಷ್ಯ ಬದಲಾದರೆ, ಜಾತಿ ಬದಲಾಯಿಸಬೇಕಾದ ಅಗತ್ಯ ಇಲ್ಲವೆಂದು ಅವರು ಹಿಂದೂ ಧರ್ಮದ ನಾಯಕರನ್ನು ಉದ್ದೇಶಿಸಿ ಹೇಳಿದರು. ಮತಾಂತರದ ವಿವಾದ ಅಲ್ಲಿಗೆ ತಣ್ಣಗಾಯಿತು.

ಕೇರಳದಿಂದಾಚೆಗೆ ತಮಿಳುನಾಡು ಹಾಗೂ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತು ಪಡಿಸಿದರೆ, ಬೇರೆಡೆ ನಾರಾಯಣ ಗುರು ಚಳವಳಿ ಹೆಚ್ಚು ಪರಿಚಿತವಲ್ಲ. ನಾರಾಯಣ ಗುರುಗಳ ಶಿಷ್ಯರೇ ಆದ ಡಾ.ಪಲ್ಪು ಅವರ ಮಗ ನಟರಾಜ ಗುರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುಗಳ ಚಿಂತನೆಯ ಪ್ರಸಾರ ಮಾಡಿದರು. ಅವರು ಶಿವಗಿರಿಯ ಸಮೀಪ ಸ್ಥಾಪಿಸಿರುವ ಈಸ್ಟ್‍ವೆಸ್ಟ್ ವಿಶ್ವವಿದ್ಯಾಲಯವಿದೆ. ಆದರೆ, ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ನೂರಾರು ಗುರುಮಂದಿರಗಳಲ್ಲಿ ಅವರಿಗಾಗಿಯೇ ಕಟ್ಟಿದ ದೇವಾಲಯಗಳಲ್ಲಿ ನಾರಾಯಣ ಗುರುಗಳ ಆರಾಧನೆ-ಭಜನೆಗಳು ಕೂಡ ನಾರಾಯಣನೆಂಬ ಈ “ನರ”ನ ಸಾಧನೆಯ ನೈಜ ಚಿತ್ರಣ ನೀಡಲು ವಿಫಲವಾಗಿವೆ. ಸಾವಿರಾರು ವರ್ಷಗಳಿಂದ ಬೇರುಬಿಟ್ಟ ವೈದಿಕಷಾಹಿ, ಫ್ಯಾಸಿಸ್ಟ್ ಶಕ್ತಿ ತನ್ನನ್ನು ಪ್ರಶ್ನಿಸಿದವರನ್ನು ನಾಶ ಮಾಡಲು ಪ್ರಯತ್ನಿಸುತ್ತದೆ. ಸಾಧ್ಯವಾಗದಿದ್ದರೆ, ತನ್ನೊಳಗೆ ಜೀರ್ಣಿಸಿಕೊಂಡು ಬಿಡುತ್ತದೆ. ಬುದ್ಧ ವಿಷ್ಣುವಿನ ಅವತಾರವಾದ, ಬಸವಣ್ಣ ನಂದಿಯಾದ ದುರಂತವೇ ನಾರಾಯಣ ಗುರುಗಳಿಗಾಗಿದೆ. ಸನ್ಯಾಸಿಯಾದ ದಿನದಿಂದ ಸಾವಿನವರೆಗೂ ಕೇರಳದ ಅತ್ಯಂತ ಕೀಳು ಜಾತಿಯವರೆನಿಸಿದ ಪುಲಯ ಜನಾಂಗದ ಅಡಿಗೆಯವನಿಂದಲೇ ಕೈತುತ್ತು ತಿಂದು ಬದುಕಿದ ನಾರಾಯಣ ಗುರುಗಳು ಇಂದು ಈಳವ – ಬಿಲ್ಲವ ಜಾತಿ ಜನರ ನಾಯಕನಾಗಿಬಿಟ್ಟಿದ್ದಾರೆ.

ವಿದ್ಯೆಯಿಂದ ಸ್ವತಂತ್ರರಾಗಿರಿ ಎಂದ ಗುರುಗಳ ಚಿಂತನೆಯನ್ನು ವಿದ್ಯೆ ಎಂದರೆ, ಅಕಾಡೆಮಿಕ್ ಶಿಕ್ಷಣ ಎಂದು ತಿಳಿದ ಕಾರಣದಿಂದಾಗಿಯೇ ಅವರ ಅನುಯಾಯಿಗಳೆನಿಸಿಕೊಂಡವರಲ್ಲಿ ಬಹಳಷ್ಟು ಮಂದಿ ಇಂದಿಗೂ ಬೌದ್ಧಿಕ ದಾಸ್ಯದಿಂದ ಮುಕ್ತವಾಗಿಲ್ಲ. ಹಾಗಿಲ್ಲದಿದ್ದರೆ, ವರ್ಣಾಶ್ರಮ ವ್ಯವಸ್ಥೆಗೆ ಸವಾಲಾಗಿ ನಾರಾಯಣ ಗುರುಗಳು ಮಂಗಳೂರಿನ ಕುದ್ರೋಳಿಯಲ್ಲಿ ಸ್ಥಾಪಿಸಿದ್ದ ದೇವಾಲಯವನ್ನು ಜೀರ್ಣೋದ್ಧಾರಗೊಳಿಸಿದ ಅವರ ಅನುಯಾಯಿಗಳು, ಅದನ್ನು ವರ್ಣಾಶ್ರಮ ವ್ಯವಸ್ಥೆಯನ್ನು ಪ್ರತಿಪಾದಿಸುವ ಶೃಂಗೇರಿ ಮಠದ ಸ್ವಾಮಿಗಳಿಂದ ಉದ್ಘಾಟನೆ ಮಾಡಿಸುತ್ತಿರಲಿಲ್ಲ. ಒಂದು ಜಾತಿ, ಒಂದು ಮತ, ಒಂದೇ ದೇವರು ಎಂದು ಸಾರಿದ ನಾರಾಯಣ ಗುರುಗಳು ಒಂದು ಜಾತಿಯ ಮಂದಿರಗಳಲ್ಲಿ ಬಂಧಿಯಾಗುತ್ತಿರಲಿಲ್ಲ. ಈ ‘ಭಕ್ತಸಮೂಹ’, ‘ಭಜನಾಮಂಡಳಿ’ಗಳಿಂದ ನಾರಾಯಣ ಗುರುಗಳನ್ನು ಬಿಡುಗಡೆಗೊಳಿಸಿ ಅವರನ್ನು ಎಲ್ಲರಿಗೂ ಸಲ್ಲುವ ಗುರುಗಳನ್ನಾಗಿ ಮಾಡಬೇಕಾಗಿದೆ. ಈ ಮೂಲಕವೇ ಕೋಮುವಾದಿ ರಾಜಕಾರಣಕ್ಕೆ ಪ್ರತಿಯಾಗಿ ‘ಸಾಮಾಜಿಕ ನ್ಯಾಯದ’ ರಾಜಕಾರಣವನ್ನು ರೂಪಿಸುವ ಕಾರ್ಯ ನಡೆಯಬೇಕಾಗಿದೆ. ಇದು ‘ಹಿಂದುತ್ವದ ಪ್ರಯೋಗಶಾಲೆ’ ಎಂಬ ಕುಖ್ಯಾತಿಗೆ ಈಡಾದ ದಕ್ಷಿಣಕನ್ನಡದಿಂದಲೇ ಪ್ರಾರಂಭವಾಗಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ...

ದಿನದ ಸುದ್ದಿ3 days ago

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ...

ದಿನದ ಸುದ್ದಿ5 days ago

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ...

ದಿನದ ಸುದ್ದಿ5 days ago

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು. ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್...

ದಿನದ ಸುದ್ದಿ7 days ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

ಅಂಕಣ1 week ago

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು...

ದಿನದ ಸುದ್ದಿ1 week ago

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ...

ದಿನದ ಸುದ್ದಿ1 week ago

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ...

ದಿನದ ಸುದ್ದಿ1 week ago

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ,...

ದಿನದ ಸುದ್ದಿ1 week ago

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು...

Trending