ದಿನದ ಸುದ್ದಿ
ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ನಾಳೆ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ
ಸುದ್ದಿದಿನಡೆಸ್ಕ್: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾತ್ರಿ 7.15ಕ್ಕೆ ರಾಷ್ಟ್ರಪತಿಗಳು ನರೇಂದ್ರ ಮೋದಿ ಮತ್ತು ಅವರ ನೂತನ ಸಚಿವ ಸಂಪುಟಕ್ಕೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಇದಕ್ಕೂ ಮುನ್ನ ನಿನ್ನೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದ ಎನ್ಡಿಎ ನಿಯೋಗವೂ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ, ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಪತ್ರವನ್ನು ಸಲ್ಲಿಸಿತು.
ಎನ್ಡಿಎ ಮೈತ್ರಿಕೂಟದ ಪಕ್ಷಗಳ ಬೆಂಬಲ ಪತ್ರವನ್ನೂ ರಾಷ್ಟ್ರಪತಿಗಳಿಗೆ ಹಸ್ತಾಂತರಿಸಲಾಯಿತು. ರಾಷ್ಟ್ರಪತಿ ಭವನದ ಹೊರಗೆ ಮಾತನಾಡಿದ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ, ಎನ್ಡಿಎ ಪ್ರಬಲ, ಸ್ಥಿರ ಮತ್ತು ಬೆಳವಣಿಗೆ ಆಧಾರಿತ ಸರ್ಕಾರವನ್ನು ರಚಿಸಲಿದೆ ಎಂದು ಹೇಳಿದರು.
ರಾಷ್ಟ್ರಪತಿ ಭವನವು ಪ್ರಮಾಣವಚನ ಸಮಾರಂಭದ ಕಾರ್ಯಕ್ರಮವನ್ನು ರೂಪಿಸಲಿದ್ದು, ಅಷ್ಟರೊಳಗೆ ಮಂತ್ರಿಮಂಡಲದ ಪಟ್ಟಿಯನ್ನು ರಾಷ್ಟ್ರಪತಿಗಳಿಗೆ ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದರು. ಜನರು ಎನ್ಡಿಎ ಸರ್ಕಾರಕ್ಕೆ ಮತ್ತೊಂದು ಅವಕಾಶ ನೀಡಿದ್ದಾರೆ.
18ನೇ ಲೋಕಸಭೆಯು ಹೊಸ ಮತ್ತು ಯುವ ಶಕ್ತಿಯ ಸದನವಾಗಿದೆ. ತಮ್ಮ ಸರ್ಕಾರ ದೇಶದ ಜನರ ಆಶಯ ಮತ್ತು ಆಕಾಂಕ್ಷೆಗಳನ್ನು ಈಡೇರಿಸಲಿದೆ ಎಂದು ನರೇಂದ್ರ ಮೋದಿ ಹೇಳಿದರು. ಸ್ಥಿರ ಸರ್ಕಾರವು ಭಾರತ ಮತ್ತು ಅದರ ಆರ್ಥಿಕತೆ ಮತ್ತು ಯುವಜನತೆಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ರಾಷ್ಟ್ರವನ್ನು ತ್ವರಿತಗತಿಯಲ್ಲಿ ಅಭಿವೃದ್ಧಿಪಡಿಸಲು ತಮ್ಮ ಸರ್ಕಾರ ಯಾವುದೇ ಅವಕಾಶವನ್ನು ಕೈಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದರು.
ಮತ್ತೊಂದೆಡೆ, ಸಂವಿಧಾನದ 75ನೇ ವಿಧಿಯ ಅಡಿಯಲ್ಲಿ ತನ್ನಲ್ಲಿರುವ ಅಧಿಕಾರವನ್ನು ಚಲಾಯಿಸುವ ಮೂಲಕ ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿಯೋಜಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದೆ.
The President will administer the oath of office and secrecy to the Prime Minister and other members of the Union Council of Ministers at 7.15 pm on June 09, 2024, at Rashtrapati Bhavan.
— President of India (@rashtrapatibhvn) June 7, 2024
ಇದಕ್ಕೂ ಮುನ್ನ ನರೇಂದ್ರ ಮೋದಿ ಅವರು, ಲೋಕಸಭೆಯಲ್ಲಿ ಎನ್ಡಿಎ ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆಯಾದರು. ಮೋದಿಯವರ ಹೆಸರನ್ನು ಸೂಚಿಸಿದ ರಾಜನಾಥ್ ಸಿಂಗ್, ಈ ಹುದ್ದೆಗೆ ಮೋದಿ ಅವರೇ ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
ರಾಜನಾಥ್ ಸಿಂಗ್ ಅವರು, ಮಂಡಿಸಿದ ಸೂಚನೆಗೆ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ. ಈ ವೇಳೆ ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಮಾತನಾಡಿ, ನರೇಂದ್ರ ಮೋದಿ ಅವರ ದೂರದರ್ಶಿತ್ವದ ನಾಯಕತ್ವದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಹಲವಾರು ಪ್ರಮುಖ ಉಪಕ್ರಮಗಳನ್ನು ಎನ್ಡಿಎ ಸರ್ಕಾರ ಕೈಗೊಂಡಿದೆ ಎಂದು ಹೇಳಿದ್ದಾರೆ.
ಈ ಅವಧಿಯಲ್ಲಿ ದೇಶ, ದಾಖಲೆ ಎನಿಸಬಹುದಾದ ಪ್ರಗತಿ ಹಾಗೂ ಬದಲಾವಣೆಯನ್ನು ಕಂಡಿದೆ. ಸೂಕ್ತ ಕಾಲದಲ್ಲಿ ಸೂಕ್ತ ನಾಯಕನನ್ನು ಭಾರತ ಹೊಂದಿದ್ದು, ಅವರೇ ನರೇಂದ್ರ ಮೋದಿಯವರಾಗಿದ್ದಾರೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ. ನರೇಂದ್ರ ಮೋದಿ ಅವರಿಗೆ ಬೆಂಬಲ ಸೂಚಿಸಿ ಮಾತನಾಡಿದ ಬಿಹಾರದ ಮುಖ್ಯಮಂತ್ರಿ ಹಾಗೂ ಜೆಡಿಯು ನಾಯಕ ನಿತೀಶ್ ಕುಮಾರ್, ಮೋದಿ ಅವರ ನಾಯಕತ್ವದಲ್ಲಿ ನಾವೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಮೋದಿಯವರು ದೇಶಕ್ಕಾಗಿ ಸೇವೆ ಸಲ್ಲಿಸಿದ್ದಾರೆ.
ಮೂರನೇ ಅವಧಿಯನ್ನು ಯಾವುದೇ ಅಡೆ-ತಡೆ ಇಲ್ಲದೆ ಪೂರೈಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಶಿವಸೇನೆಯ ಶಿಂಧೆ ಬಣದ ನಾಯಕ ಏಕನಾಥ್ ಶಿಂಧೆ, ಎಲ್ಜೆಪಿ ರಾಮ್ವಿಲಾಸ್ ಬಣದ ಮುಖ್ಯಸ್ಥ ಚಿರಾಂಗ್ ಪಾಸ್ವಾನ್, ಎನ್ಸಿಪಿ ನಾಯಕ ಅಜಿತ್ ಪವಾರ್, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ಅಪ್ನಾದಳ್-ಎಸ್ ನಾಯಕಿ ಅನುಪ್ರಿಯಾ ಪಟೇಲ್ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಸೂಚನೆಗೆ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ಮೋದಿ, ಹಲವು ಪಕ್ಷಗಳನ್ನೊಳಗೊಂಡ ಎನ್ಡಿಎ ಮೈತ್ರಿಕೂಟ, ಅಧಿಕಾರಕ್ಕಾಗಿ ರಚನೆಯಾದ ಒಕ್ಕೂಟವಲ್ಲ. ದೇಶ ಮೊದಲು ಎಂಬ ಸ್ಫೂರ್ತಿಯೊಂದಿಗೆ ಕೆಲಸ ಮಾಡಲು ಒಕ್ಕೂಟ ಬದ್ಧವಾಗಿದೆ ಎಂದು ಹೇಳಿದರು. ಭಾರತದ ಇತಿಹಾಸದಲ್ಲಿ ಎನ್ಡಿಎ ಅತ್ಯಂತ ಯಶಸ್ವಿ ಮೈತ್ರಿಕೂಟವಾಗಿದೆ ಮತ್ತು ಎಲ್ಲ ನಿರ್ಧಾರಗಳನ್ನು ಒಟ್ಟಾಗಿ ಕೈಗೊಳ್ಳುವುದು ನಮ್ಮೆಲ್ಲರ ಗುರಿಯಾಗಿರುತ್ತದೆ. ದೇಶದ ಜನತೆ ಇಂದು 22 ರಾಜ್ಯಗಳಲ್ಲಿ ಸರ್ಕಾರ ರಚನೆಗೆ ಎನ್ಡಿಎಗೆ ಅವಕಾಶ ಮಾಡಿಕೊಟ್ಟಿದೆ ಎಂದರು. ಕಳೆದ ಹತ್ತು ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯಲು ಎನ್ಡಿಎ ಶ್ರಮಿಸಿದೆ. ಉತ್ತಮ ಆಡಳಿತ ನೀಡಲು ಎನ್ಡಿಎ ಮೈತ್ರಿಕೂಟದ ಎಲ್ಲ ನಾಯಕರು ಆಧಾರಸ್ತಂಭವಾಗಿ ನಿಂತಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದರು.
The passing away of Shri Ramoji Rao Garu is extremely saddening. He was a visionary who revolutionized Indian media. His rich contributions have left an indelible mark on journalism and the world of films. Through his noteworthy efforts, he set new standards for innovation and… pic.twitter.com/siC7aSHUxK
— Narendra Modi (@narendramodi) June 8, 2024
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ, ಸತತ ಮೂರನೇ ಬಾರಿಗೆ ಬಹುಮತ ಗಳಿಸಿದೆ. ಒಡಿಶಾ ಮತ್ತು ಆಂಧ್ರಪ್ರದೇಶದಲ್ಲೂ ಬಿಜೆಪಿ ಗೆಲುವು ಸಾಧಿಸಿದ್ದು, ಮೆಚ್ಚುಗೆಯ ವಿಚಾರವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಆರ್ಎಲ್ಡಿ ಮುಖ್ಯಸ್ಥ ಜಯಂತ್ ಚೌಧರಿ, ಕೇಂದ್ರ ಸಚಿವರಾದ ಪಿಯುಶ್ ಗೋಯಲ್ ಮತ್ತು ಅನುರಾಗ್ ಸಿಂಗ್ ಠಾಕೂರ್ ಸೇರಿದಂತೆ ಅನೇಕ ಸಚಿವರು ಉಪಸ್ಥಿತರಿದ್ದರು.
ಅಲ್ಲದೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ, ಮಣಿಪುರ ಮುಖ್ಯಮಂತ್ರಿ ಬೀರೇನ್ ಸಿಂಗ್ ಸಭೆಯಲ್ಲಿ ಪಾಲ್ಗೊಂಡಿದ್ದರು.
ಎನ್ಡಿಎ ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು, ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಮತ್ತು ಡಾ.ಮುರಳಿ ಮನೋಹರ ಜೋಶಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಮೋದಿ ಅವರು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ7 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ3 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ2 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ2 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

