ನೆಲದನಿ
ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ನಾ. ಡಿಸೋಜ
ನಾ. ಡಿಸೋಜ ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ತಮ್ಮೆಲ್ಲ ಕಥೆ, ಕಾದಂಬರಿಗಳ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಚ್ಚರಿಸುತ್ತ ಬಂದಿದ್ದು, ಪರಿಸರ ನಾಶವೇ ಮಾನವ ಜನಾಂಗದ ವಿನಾಶದ ಮೂಲ, ಪರಿಸರವನ್ನುಳಿಸಿಕೊಂಡು ಬಾಳಿದರೆ ಮಾನವನ ಬಾಳೂ ಸಂತುಷ್ಟ ಎಂಬುದನ್ನು ಮತ್ತೆ ಮತ್ತೆ ಪ್ರಸ್ತಾಪಿಸುತ್ತಾರೆ.
ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ ಅವರು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್ 06 ರಂದು ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ.
ತಂದೆ ಶಾಲಾ ಮಕ್ಕಳಿಗೆ ಕಲಿಸಲು ಬರೆದುಕೊಂಡಿದ್ದ ಪುಸ್ತಕಗಳಲ್ಲಿನ ಪದ್ಯಗಳನ್ನು ಕಲಿಯುವುದರ ಮೂಲಕ ಡಿಸೋಜ ಅವರ ಸಾಹಿತ್ಯಾಸಕ್ತಿ ಮೊಳಕೆಯೊಡೆಯತೊಡಗಿತ್ತು. ಜೊತೆಗೆ ತಾಯಿ ಹೇಳುತ್ತಿದ್ದ ಜನಪದ ಗೀತೆಗಳು, ಕಥೆಗಳು ಡಿಸೋಜರ ಮನಸ್ಸಿನ ಮೇಲೆ ಮೋಡಿ ಮಾಡತೊಡಗಿದ್ದವು. ಹೈಸ್ಕೂಲಿನಲ್ಲಿದ್ದಾಗಲೇ ಇವರ ಸಾಹಿತ್ಯಾಸಕ್ತಿಯನ್ನು ಗಮನಿಸಿ, ಬೆಳೆಸಿದವರು ಗೊರೂರು ನರಸಿಂಹಾಚಾರ್ಯರರು.
ಶಿವಮೊಗ್ಗದಲ್ಲಿ ಇಂಟರ್ಮೀಡಿಯೇಟ್ ಕಾಲೇಜು (ಈಗಿನ ಸಹ್ಯಾದ್ರಿ ಕಾಲೇಜು) ಸೇರಿದ ಇವರು ಪ್ರತಿಭೆ ತೋರಿಸಿದ್ದು ಕನ್ನಡ ವಿಷಯದಲ್ಲಿ ಉತ್ತಮ ಅಂಕಗಳನ್ನು ಪಡೆಯುವುದರಲ್ಲಿ. ಮೈಸೂರಿಗೆ ಹೋಗಿ ಕಾಲಕಳೆದದ್ದೆಲ್ಲಾ ಸಾರ್ವಜನಿಕ ಪುಸ್ತಕ ಭಂಡಾರಗಳಲ್ಲಿ. ಮಾಸ್ತಿ, ಕುವೆಂಪು, ಅ.ನ.ಕೃ., ಕಾರಂತರು, ಗೋಕಾಕ್, ಗೊರೂರು ಇವರುಗಳಲ್ಲದೆ ಪರ್ಲ್ಬಕ್, ಸಾಮರ್ ಸೆಟ್ ಮಾಮ್, ಡಿಕನ್ಸ್ ಮುಂತಾದವರ ಕೃತಿಗಳನ್ನು ವ್ಯಾಪಕವಾಗಿ ಅಧ್ಯಯನ ಮಾಡಿದರು.
ಡಿಸೋಜ ಅವರು ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಗಳಲ್ಲಿ ಯಶಸ್ವಿಯಾಗಿದ್ದು ಅವರ ವೃತ್ತಿ ಬದುಕಿಗೊಂದು ಆಸರೆಯಾಯಿತು. ನಾ. ಡಿಸೋಜರವರು ಉದ್ಯೋಗಕ್ಕೆ ಸೇರಿದ್ದು ಲೋಕೋಪಯೋಗಿ ಇಲಾಖೆಯಲ್ಲಿ ಟೈಪಿಸ್ಟ್ ಮತ್ತು ದ್ವಿತೀಯ ದರ್ಜೆ ಗುಮಾಸ್ತನಾಗಿ. ನಂತರ ಪ್ರಥಮ ದರ್ಜೆ ಗುಮಾಸ್ತರಾಗಿ ಶರಾವತಿ ಯೋಜನೆ ಕಾರ್ಗಲ್, ಮಾಸ್ತಿಕಟ್ಟೆ, ತೀರ್ಥಹಳ್ಳಿ ಮುಂತಾದೆಡೆಗಳಲ್ಲಿ ಕಾರ್ಯನಿರ್ವಹಿಸಿ 1995ರಲ್ಲಿ ನಿವೃತ್ತಿಹೊಂದಿದರು.
ನಾ. ಡಿಸೋಜ ಮೊದಲಿಗೆ ‘ಪ್ರಪಂಚ’ ಪತ್ರಿಕೆಗೆ ಕಥೆಗಳನ್ನು ಬರೆಯತೊಡಗಿದರು. ನಂತರ ಎಲ್ಲ ಪ್ರಮುಖ ಪತ್ರಿಕೆಗಳಲ್ಲೂ ಇವರ ಕಥೆಗಳು ಪ್ರಕಟವಾಗತೊಡಗಿದವು. ಡಿಸೋಜರ ಮೊದಲ ಕಾದಂಬರಿ ‘ಬಂಜೆ ಬೆಂಕಿ’ ಪ್ರಕಟವಾದದ್ದು 1964ರಲ್ಲಿ. ನಂತರ ಮಂಜಿನ ಕಾನು, ಈ ನೆಲ ಈ ಜಲ, ಕೆಂಪು ತ್ರಿಕೋನ, ನೆಲೆ, ಮಾನವ – ಹೀಗೆ ಇವರು ಸುಮಾರು 40ಕ್ಕೂ ಹೆಚ್ಚಿನ ಕಾದಂಬರಿಗಳನ್ನು ಬರೆದಿದ್ದಾರೆ. ಪರಿಸರ ನಾಶ, ಕ್ರೈಸ್ತ ಜನಾಂಗದ ಹಿನ್ನೆಲೆ, ಭ್ರಷ್ಟಾಚಾರದ ವಸ್ತು, ಹಿಂದುಳಿದ ಬುಡಕಟ್ಟು ಜನಾಂಗದ ಚಿತ್ರಣ ಹೀಗೆ ಹತ್ತು ಹಲವು ವಿಷಯಗಳನ್ನೊಳಗೊಂಡ ಅವರ ಕಾದಂಬರಿಗಳು ಓದುಗರ ಮನಸೂರೆಗೊಂಡಿವೆ.
ಇವರು ಪತ್ರಿಕೆಗಳಿಗೆ ಬರೆದ ಸಣ್ಣ ಕಥೆಗಳು 09 ಸಂಕಲನಗಳಲ್ಲಿ ಸಂಕಲಿತಗೊಂಡಿದ್ದು, ಸಮಗ್ರ ಕಥೆಗಳು 02 ಸಂಪುಟಗಳಲ್ಲಿ ಪ್ರಕಟವಾಗಿವೆ.
ನಾಡಿಗೆ ಬೆಳಕನ್ನು ನೀಡಲು ಪ್ರಾರಂಭಿಸಿದ ವಿದ್ಯುಚ್ಛಕ್ತಿ ಯೋಜನೆಯ ಅಡಿಯಲ್ಲಿ ಬಹಳಷ್ಟು ಜನರ ಬದುಕುಗಳು ಕತ್ತಲೆಯಲ್ಲಿ ಕರಗಿ ಹೋಗುವ ವಸ್ತುವನ್ನಾಗಿ ಉಳ್ಳ ‘ಮುಳುಗಡೆ’ ಕಾದಂಬರಿಯು ಸುಧಾ ಯುಗಾದಿ ಕಾದಂಬರಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದೆ, ಸುರೇಶ್ ಹೆಬ್ಲೀಕರ್ರವರ ನಿರ್ದೇಶನದಲ್ಲಿ ‘ಕಾಡಿನ ಬೆಂಕಿ’, ಗಿರೀಶ್ ಕಾಸರವಳ್ಳಿಯವರ ನಿರ್ದೇಶನದಲ್ಲಿ ‘ದ್ವೀಪ ’, ಸಿರಿಗಂಧ ಶ್ರೀನಿವಾಸಮೂರ್ತಿಯವರ ನಿರ್ದೇಶನದಲ್ಲಿ ‘ಬಳುವಳಿ’, ಕೋಡ್ಲು ರಾಮಕೃಷ್ಣರವರ ನಿರ್ದೇಶನದಲ್ಲಿ ‘ಬೆಟ್ಟದಪುರದ ದಿಟ್ಟ ಮಕ್ಕಳು’ ಮತ್ತು ಮನುರವರ ನಿರ್ದೇಶನದಲ್ಲಿ ‘ಆಂತರ್ಯ’ ಕಾದಂಬರಿಗಳು ಚಲನಚಿತ್ರಗಳಾಗಿಯೂ ಜನಪ್ರಿಯತೆಯನ್ನು ಪಡೆದಿವೆ.
ಇವುಗಳಲ್ಲಿ ‘ಕಾಡಿನ ಬೆಂಕಿ’ ಚಿತ್ರ ರಜತ ಕಮಲ ಪ್ರಶಸ್ತಿಯನ್ನೂ , ‘ದ್ವೀಪ’ ಚಿತ್ರ ‘ಸ್ವರ್ಣ ಕಮಲ’ ಪ್ರಶಸ್ತಿಯನ್ನೂ ಗಳಿಸಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಹಿರಿಮೆ ಗಳಿಸಿವೆ. ದೂರದರ್ಶನ ಮಾಧ್ಯಮದಲ್ಲಿ ಸಹ ಮಕ್ಕಳ ಧಾರವಾಹಿ, ಕಥೆಗಳು, ಹಲವಾರು ಕಾದಂಬರಿಗಳು ನಾಟಕಕ್ಕೆ ರೂಪಾಂತರವಾಗಿ ಪ್ರದರ್ಶಿತವಾಗಿವೆ.
‘ಮುಳುಗಡೆ’, ‘ಕೊಳಗ’, ‘ಒಳಿತನ್ನು ಮಾಡಲು ಬಂದವರು’, ‘ಬಣ್ಣ’, ‘ಇಬ್ಬರು ಮಾಜಿಗಳು’ ಮುಂತಾದ ಕಾದಂಬರಿಗಳು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ., ಬಿ.ಕಾಂ., ತರಗತಿಗಳಿಗೆ, ಬೆಂಗಳೂರು ವಿಶ್ವವಿದ್ಯಾಲಯದ ಬಿ.ಎ. ತರಗತಿಗಳಿಗೆ, ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಕಾಂ. ತರಗತಿಗಳಿಗೆ ಮತ್ತು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವೂ ಸೇರಿದಂತೆ ಮುಂತಾದೆಡೆಗಳಲ್ಲಿ ಪಠ್ಯಪುಸ್ತಕಗಳಾಗಿಯೂ ಆಯ್ಕೆಯಾಗಿದೆ.
ವಿಶೇಷವಾಗಿ ಮಕ್ಕಳ ಸಾಹಿತ್ಯದಲ್ಲಿ ಕೃಷಿ ಮಾಡಿರುವ ನಾ.ಡಿಸೋಜ ಮಕ್ಕಳ ಸಾಹಿತ್ಯದ ವಿವಿಧ ಪ್ರಕಾರದಲ್ಲಿ 12 ಕೃತಿಗಳನ್ನು ಪ್ರಕಟಿಸಿದ್ದಾರೆ.
ಡಿಸೋಜ ಅವರ ಹಲವಾರು ಸಣ್ಣ ಕಥೆಗಳು ಕೊಂಕಣಿ, ಮಲಯಾಳಂ, ತೆಲುಗು, ಸಂಸ್ಕೃತ, ಹಿಂದಿ, ಇಂಗ್ಲಿಷ್ ಭಾಷೆಗೂ ಅನುವಾದಗೊಂಡಿವೆ. ತುಂಜಾಲು ಕಾದಂಬರಿಯು ತೆಲುಗು ಭಾಷೆಗೆ, ಪ್ರೀತಿಯೊಂದೇ ಸಾಲದೆ, ಜಲಪಾತದ ಸುತ್ತ, ಇಗರ್ಜಿ, ಸುತ್ತಲಿನ ಹತ್ತು ಮನೆಗಳು, ಕಾಡಿನ ಬೆಂಕಿ, ತಿರುವು ಮುಂತಾದ ಕಾದಂಬರಿಗಳು ಕೊಂಕಣಿಗೆ, ಇಗರ್ಜಿ ಕಾದಂಬರಿ, ದ್ವೀಪ, ಬಾಲಗಂಧರ್ವ ಮತ್ತು ಏಸುಕ್ರಿಸ್ತ ಕೃತಿಗಳು ಇಂಗ್ಲಿಷ್ಗೂ, ನೇತ್ರಾಣಿ ಗುಡ್ಡಕ್ಕೆ ಯಾತ್ರೆ ಕೃತಿಯು ಹಿಂದಿ ಭಾಷೆಗೂ ಅನುವಾದಗೊಂಡಿದೆ.
ನಾ.ಡಿಸೋಜರವರ ಸಾಹಿತ್ಯ ಕುರಿತು ಮದರಾಸು ವಿಶ್ವವಿದ್ಯಾಲಯದ ಶ್ರೀ ಪ್ರಕಾಶ್ ಸೈಮನ್ರವರು ‘ನಾ. ಡಿಸೋಜರವರ 25 ಕಥೆಗಳು ಒಂದು ಅಧ್ಯಯನ’ ಕುರಿತು ಎಂ.ಫಿಲ್. ಪದವಿ (1995), ಮಧುರೆ ಕಾಮರಾಜ ವಿಶ್ವವಿದ್ಯಾಲಯದ ಎಂ.ಎಂ. ಮಂಜುನಾಥರವರು ‘ನಾ. ಡಿಸೋಜರವರ ಕಾದಂಬರಿಗಳಲ್ಲಿ ಮುಳುಗಡೆ ಸಮಸ್ಯೆ – ಒಂದು ಅಧ್ಯಯನ’ ಮಹಾಪ್ರಬಂಧಕ್ಕೆ ಎಂ.ಫಿಲ್. ಪದವಿ (1998), ಕುವೆಂಪು ವಿಶ್ವವಿದ್ಯಾಯದ ಟಿ.ಎಸ್. ಶೈಲಾರವರು ‘ನಾ. ಡಿಸೋಜರವರ ಕಾದಂಬರಿಗಳಲ್ಲಿ ಸಾಂಸ್ಕೃತಿಕ ಸ್ಥಿತ್ಯಂತರಗಳು’ ಮಹಾ ಪ್ರಬಂಧಕ್ಕೆ ಎಂ.ಫಿಲ್ ಪದವಿ (2001) ಮತ್ತು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಗಂಗಾ ಮೂಲಿಮನಿಯವರು ‘ನಾ. ಡಿಸೋಜ ಒಂದು ಸಾಂಸ್ಕೃತಿಕ ಅಧ್ಯಯನ’ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ (2001) ಪಡೆದಿದ್ದಾರೆ.
ನಾ. ಡಿಸೋಜ ಅವರು ಕರ್ನಾಟಕ ಸಾಹಿತ್ಯ ಅಕಾಡಮಿ, ಕೊಂಕಣಿ ಸಾಹಿತ್ಯ ಅಕಾಡಮಿ, ಪುಸ್ತಕ ಪ್ರಾಧಿಕಾರ, ಕುವೆಂಪು ವಿಶ್ವವಿದ್ಯಾಲಯದ ಸೆನೆಟ್, ಹಂಪಿ ಕನ್ನಡ ವಿಶ್ವವಿದ್ಯಾಲಯದ ಸೆನೆಟ್, ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆಡಳಿತ ಪರಿಷತ್, ಕುವೆಂಪು ರಂಗ ಮಂದಿರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂತಾದ ಸಂಸ್ಥೆಗಳಲ್ಲಿ ಸದಸ್ಯರಾಗಿ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಗುಲ್ವಾಡಿ ವೆಂಕಟರಾವ ಪ್ರಶಸ್ತಿ, ಅಖಿಲ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್, ಮಾಸ್ತಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಇವರ ಮುಡಿಗೇರಿವೆ. ಕೊಡಗಿನಲ್ಲಿ ನಡೆದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಹೆಚ್ಚಿನ ಮಾಹಿತಿಗಾಗಿ
ನಾ. ಡಿಸೋಜಾ ಅವರ ಕಾದಂಬರಿಯಾಧಾರಿತ
ಬೆಟ್ಟದ ಪುರದ ದಿಟ್ಟ ಮಕ್ಕಳು ಸಿನಿಮಾ: https://www.youtube.com/watch?v=fvTMpbWMVXA
ದ್ವೀಪ ಸಿನಿಮಾ: https://www.youtube.com/watch?v=EY-qzjFtda8
ಪರಾಮರ್ಶನ
• https://kn.wikipedia.org
• https://sites.google.com
ಸುದ್ದಿದಿನ.ಕಾಂ|ವಾಟ್ಸಾಪ್|9980346243