ದಿನದ ಸುದ್ದಿ
ನೇಣು ಕುಣಿಕೆಗೆ ತಲೆಯೊಡ್ಡಿದ ‘ನಿರ್ಭಯಾ’ ಹಂತಕರು
ಸುದ್ದಿದಿನ,ನವದೆಹಲಿ: 2012ರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ದೊರಕಿದೆ. ನಿರ್ಭಯಾ ಪ್ರಕರಣದ ದೋಷಿಗಳಿಗೆ ಇಂದು ಬೆಳಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ.
ಇಂದು ಬೆಳಗಿನ ಜಾವ ಮೂರು ಗಂಟೆವರೆಗೂ ದೋಷಿಗಳು ಡೆತ್ ವಾರೆಂಟ್ ಮುಂದೂಡಲು ಪ್ರಯತ್ನಿಸಿದ್ದರು. ಪಟಿಯಾಲಾ ಹೌಸ್ ಕೋರ್ಟ್ ನೀಡಿರುವ ಡೆತ್ ವಾರೆಂಟ್ ಗೆ ತಡೆ ನೀಡುವಂತೆ ಗುರುವಾರ ರಾತ್ರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ನಲ್ಲಿ ಅರ್ಜಿ ವಜಾಗೊಳ್ಳುತ್ತಿದ್ದಂತೆ ಮಧ್ಯರಾತ್ರಿ ಸುಪ್ರೀಂಕೋರ್ಟ್ ಗೆ ಹೋಗಿ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ದೋಷಿಗಳು ಮನವಿ ಮಾಡಿಕೊಂಡಿದ್ದರು.
ಮಧ್ಯರಾತ್ರಿ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಾದ-ಪ್ರತಿವಾದವನ್ನು ಆಲಿಸಿತು. ತದನಂತರ ಅರ್ಜಿಯನ್ನು ವಜಾಗೊಳಿಸಿತು. ಇತ್ತ ಅರ್ಜಿ ವಜಾಗೊಳ್ಳುತ್ತಿದ್ದಂತೆ ತಿಹಾರ್ ಜೈಲಿನ ಮುಂದೆ ಜನ ಸೇರಲು ಆರಂಭಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ತಿಹಾರ ಜೈಲಿನ ಆವರಣದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.