ರಾಜಕೀಯ
ಅಹಿಂಸೆ : ಎಂದಿಗೂ ಬತ್ತದ ನದಿಯ ನಿನಾದ
ಸಂಘರ್ಷವನ್ನು ಸ್ಥಾಯಿಯಾಗಿಸಿ ಪ್ರಯೋಜನ ಪಡೆದುಕೊಳ್ಳುವ ಪ್ರಯತ್ನಗಳು ನಿರಂತರವಾಗಿ ಯಶಸ್ಸು ಕಾಣುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅಹಿಂಸೆಯ ಮೌಲ್ಯದ ಆಧಾರದಲ್ಲಿ ಪರ್ಯಾಯ ರಾಜಕಾರಣ ರಾಷ್ಟ್ರದಾದ್ಯಂತ ರೂಪುಗೊಳ್ಳಬೇಕಾದ ಅನಿವಾರ್ಯತೆಯನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ಕಾಡಿಸಿಕೊಳ್ಳಬೇಕಿದೆ. ದೇಶವೊಂದು ಇನ್ನೊಂದು ರಾಷ್ಟ್ರದ ಕುರಿತು ಸಿಟ್ಟಿಗೇಳುವಿಕೆ ಜಾಗತಿಕ ಮಟ್ಟದ ಸಂಘರ್ಷವನ್ನು ಸಂಕೇತಿಸಿದರೆ, ಜನರ ನಡುವೆಯೇ ನಡೆಯುವ ಜಗಳಗಳು ಆಂತರಿಕ ವ್ಯಗ್ರತೆಗೆ ಸಾಕ್ಷಿಯಾಗುತ್ತವೆ. ವಿವಿಧ ಸ್ತರಗಳಲ್ಲಿ ವ್ಯಗ್ರತೆಯು ವ್ಯಕ್ತಿಯೊಳಗೆ ಮೇಳೈಸಿಕೊಳ್ಳುತ್ತದೆ. ಅದು ವಿವಿಧ ವರ್ತನೆಗಳಲ್ಲಿ ವ್ಯಕ್ತವಾಗುತ್ತದೆ. ಆ ವರ್ತನೆಗಳು ಉಂಟುಮಾಡುವ ಪರಿಣಾಮಗಳು ವ್ಯಕ್ತಿಗತ ಹಾಗೂ ಸಾಮೂಹಿಕ ಸಂಘರ್ಷಗಳ ರೂಪದಲ್ಲಿ ಕಂಡುಬರುತ್ತವೆ. ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಅಧಿಕಾರ ಕೇಂದ್ರಗಳು ಈ ರೂಪಗಳನ್ನು ತಮ್ಮ ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಅತ್ಯಂತ ಚಾಣಾಕ್ಷಯುತವಾಗಿ ಬಳಸಿಕೊಳ್ಳುತ್ತವೆ. ದೇಶ, ಧರ್ಮ ಮತ್ತು ಜಾತಿಯ ಅಸ್ಮಿತೆಯ ಪ್ರಶ್ನೆಗಳನ್ನು ಮುನ್ನೆಲೆಗೆ ತಂದು ತಮ್ಮ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ರಾಜಕಾರಣ ಅತ್ಯಂತ ಯಶಸ್ವಿಯಾಗಿ ನಿಭಾಯಿಸಲ್ಪಡುತ್ತದೆ.
ಪ್ರಜಾಪ್ರಭುತ್ವವಾದಿ ಆಡಳಿತ ವಿನ್ಯಾಸಗೊಳಿಸಗೊಳಿಸಿಕೊಂಡಿರುವ ಅಭಿವೃದ್ಧಿ ಮತ್ತು ಅದಕ್ಕೆ ಸಂಬಂಧಿಸಿದ ಪರಿಕಲ್ಪನೆಗಳು ಅಂಥ ರಾಜಕಾರಣಕ್ಕೆ ಪೂರಕವಾಗಿರುವಂತೆಯೇ ಪಾತ್ರವನ್ನು ನಿರ್ವಹಿಸುತ್ತಿವೆ. ಟೊಳ್ಳುತನದ ಸಂಗತಿಗಳೊಂದಿಗೆ ಅಭಿವೃದ್ದಿಯನ್ನು ವ್ಯಾಖ್ಯಾನಿಸುವ ಪ್ರವೃತ್ತಿಯನ್ನು ಸಾರ್ವತ್ರಿಕಗೊಳಿಸುವ ಈ ಅಭಿವೃದ್ಧಿಯು ಅದಕ್ಕೆ ಸಹಕಾರಿಯಾಗಿರುತ್ತದೆ. ಪ್ರಶ್ನಿಸುವ ಬದಲಾಗಿ ಆ ಸಂಕುಚಿತ ರಾಜಕಾರಣವು ಅಧಿಕಾರ ಮತ್ತು ಪ್ರಭಾವವನ್ನು ಸ್ಥಿರವಾಗಿರಿಸಿಕೊಂಡು ಬಹುದೊಡ್ಡ ಸಾಮಾಜಿಕ ಪಲ್ಲಟದ ಸಾಧ್ಯತೆಗಳನ್ನು ಒಡೆಯುವುದರ ಕಡೆಗೆ ನಡೆದುಬಿಡುತ್ತದೆ. ಅಡ್ಡ ಎದುರಾಗುವವರನ್ನು ತಮ್ಮ ಪ್ರಭಾವೀ ಪ್ರಾಬಲ್ಯದ ಬಲದೊಂದಿಗೆ ಹತ್ತಿಕ್ಕಿಬಿಡುತ್ತದೆ. ಅಧಿಕಾರ ಕೇಂದ್ರಗಳ ಮೂಲಕ ದಾಟಿಕೊಂಡ ಶಿಕ್ಷಣವು ವ್ಯಕ್ತಿಗತ ಪ್ರಯೋಜನವಾದಿ ಯೋಚನೆಗಳನ್ನೇ ಬಿತ್ತುವುದರ ಕಡೆಗೆ ಆಸಕ್ತಿ ವಹಿಸುವುದರಿಂದ ಶಿಕ್ಷಿತ-ಸುಶಿಕ್ಷಿತ ವಲಯವೂ ಅನಕ್ಷರಸ್ತ ಸಮುದಾಯಗಳಲ್ಲಿರುವ ಮೌಢ್ಯವನ್ನೇ ಅಂತರ್ಗತ ಗುಣಲಕ್ಷಣವಾಗಿಸಿಕೊಳ್ಳುತ್ತದೆ. ಅದನ್ನು ಜನರೊಳಗೂ ವ್ಯಾಪಕವಾಗಿಸಲು ಪ್ರಯತ್ನಿಸುತ್ತದೆ. ಹೀಗಾದಾಗ ಹೊಸ ಪೀಳಿಗೆಯು ಅದರ ರಹಸ್ಯ ಕಾರ್ಯಸೂಚಿಯ ಭಾಗವಾಗಿರುವ ಅಪಮೌಲ್ಯೀಕೃತ ಅಂಶಗಳು ರೂಪಿಸುವ ಚೌಕಟ್ಟುಗಳಲ್ಲಿ ಬಂಧಿಯಾಗಿ ಯೋಚಿಸಲಾರಂಭಿಸುತ್ತದೆ.
ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳು
ಈ ಹಂತದಲ್ಲಿಯೇ ಸಂಘರ್ಷದ ಪರ ನಿಲ್ಲುವ ದೃಷ್ಟಿಕೋನಗಳನ್ನೇ ಮುಖ್ಯವಾಗಿಸಿಕೊಳ್ಳುತ್ತದೆ. ಅಹಿಂಸೆಯ ಮೌಲ್ಯದ ಸಕಾರಾತ್ಮಕತೆಯು ಹಿಂಸೆಯ ಪರವಾದ ವಿತಂಡವಾದಿ ಆಲೋಚನೆಗಳ ಭರಾಟೆಯಲ್ಲಿ ಹಿನ್ನೆಲೆಗೆ ಸರಿಯುತ್ತದೆ. ಇಂಥ ಸಂದರ್ಭದಲ್ಲಿ ಅಹಿಂಸಾತ್ಮಕ ಮನೋಧರ್ಮವನ್ನು ಮುನ್ನೆಲೆಗೆ ತಂದು ಅಧಿಕೃತಗೊಳಿಸುವ ಅಪ್ಪಟ ಪ್ರಯೋಗಶೀಲ ರಾಜಕಾರಣ ಮೊಳಕೆಯೊಡೆಯಬೇಕು. ಹಾಗಾಗುತ್ತಿಲ್ಲ. ಹಾಗಾಗುವುದಕ್ಕೆ ಸಾಮಾಜಿಕ, ರಾಜಕೀಯ, ಧಾರ್ಮಿಕ ಕೇಂದ್ರಗಳ ಮುಂಚೂಣಿ ಮುಖಂಡತ್ವ ಬಿಡುತ್ತಿಲ್ಲ. ತಾವು ಸಮಸ್ಯೆ ಎಂದು ಪರಿಭಾವಿಸಿಕೊಂಡಿರುವ ಜಟಿಲತೆಗೆ ಪ್ರಾಮಾಣಿಕವಾಗಿ ಪರಿಹಾರ ಹುಡುಕಿಕೊಳ್ಳುವ ಪ್ರಯತ್ನಗಳನ್ನೂ ನಡೆಸುತ್ತಿಲ್ಲ. ಅಂಥ ಪ್ರಾಮಾಣಿಕ ಹೆಜ್ಜೆಗಳು ಅಹಿಂಸೆಯ ಪರವಾದ ಅಲೆಯನ್ನು ಸೃಷ್ಟಿಸುವ ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳನ್ನು ಹೊಳೆಸುತ್ತವೆ. ಇದರ ಬದಲಾಗಿ ಮತ್ತೆ ಜಾತಿನಿಷ್ಠ ಮಿತಿಗಳನ್ನು ವಿಸ್ತರಿಸುವ, ಧರ್ಮದೊಳಗೆ ಇಲ್ಲದೇ ಇರುವ ಸಂಗತಿಗಳನ್ನು ಇತಿಹಾಸದೊಂದಿಗೆ ತಳುಕುಹಾಕುವ ಮತ್ತು ಅಂಥ ಸಂಕುಚಿತ ಪಠ್ಯಗಳ ಆಧಾರದಲ್ಲಿಯೇ ಅಧಿಕಾರ ರಾಜಕಾರಣವನ್ನು ಬದುಕಿಸಿಬಿಡುವ ಹುನ್ನಾರಗಳನ್ನು ಹೊಳೆಸಿಕೊಳ್ಳುವುದರ ಕಡೆಗೇ ಅತ್ಯುತ್ಸಾಹ ವ್ಯಕ್ತವಾಗುತ್ತಿದೆ. ಒಳ್ಳೆಯದನ್ನು ಹೇಳಿದರೆ ಸುಲಭಕ್ಕೆ ಒಪ್ಪಿಕೊಳ್ಳದ ಹಠಮಾರಿತನ ಅದರದ್ದು. ಗಾಂಧಿ ಜೀವಂತಗೊಳಿಸಿದ ಅಹಿಂಸೆಯ ಮಾದರಿಯ ಬಗ್ಗೆ ಪ್ರಸ್ತಾಪಿಸಿದರೆ ಅದು ದಿಢೀರನೆ ಅವಿವೇಕತನದ ಅತಿರೇಕವನ್ನು ಪ್ರದರ್ಶಿಸಿಬಿಡುತ್ತದೆ. ‘ಗಾಂಧಿ ಏನಿದ್ದರೂ ಆ ಕಾಲಕ್ಕೆ, ಈಗಲ್ಲ’ ಎಂದು ಉಡಾಫೆಯ ಮನೋಭಾವವನ್ನು ತೂರಿಬಿಡುತ್ತದೆ.
ಗಾಂಧಿಯ ವ್ಯಕ್ತಿತ್ವದೊಂದಿಗೇ ಬೆರೆತುಹೋಗಿದ್ದ ಅಹಿಂಸೆಯ ಮೌಲ್ಯವು ವರ್ತಮಾನದಲ್ಲಷ್ಟೇ ಅಲ್ಲ, ಭವಿಷ್ಯದ ಜಗತ್ತಿನ ಎಲ್ಲ ಬಗೆಯ ಸಂಘರ್ಷಗಳನ್ನು ಕೊನೆಗಾಣಿಸುವ ಪ್ರಾಕೃತಿಕ ದಿವ್ಯೌಷಧ ಎಂಬುದನ್ನು ಮನಗಾಣಲೇಬೇಕು. ಗಾಂಧಿಯನ್ನು ಅರ್ಥೈಸಿಕೊಳ್ಳದ ಮನಸ್ಸುಗಳು ಈ ಕ್ಷಣಕ್ಕೆ ತಮ್ಮ ಮೂಗಿನ ನೇರಕ್ಕೆ ತೀರ್ಮಾನವನ್ನು ಕೈಗೊಂಡುಬಿಡುತ್ತವೆ. ಸಂಪೂರ್ಣ ತಿಳುವಳಿಕೆ ಇಲ್ಲದೇ ರೂಪುಗೊಳ್ಳುವ ಅಂಥ ವ್ಯಕ್ತಿಗತ ನಿಲುವುಗಳು ಸಮೂಹಕ್ಕೂ ದಾಟಿಕೊಳ್ಳುತ್ತವೆ. ಗಾಂಧಿ ಮತ್ತು ಅವರು ಪ್ರತಿಪಾದಿಸಿದ ಅಹಿಂಸಾವಾದ ಅಪ್ರಸ್ತುತ ಎಂದು ಹೇಳುವ ಕಾಲಕ್ಕೆ ಅಹಿಂಸೆಯ ತಾತ್ವಿಕತೆಯೊಂದಿಗಿನ ಗಾಂಧಿ ವ್ಯಕ್ತಿತ್ವವನ್ನು ಸಮಗ್ರವಾಗಿ ತಿಳಿದುಕೊಳ್ಳುವ ಪ್ರಯತ್ನಗಳನ್ನೇ ನಡೆಸುವುದಿಲ್ಲ. ಆ ತಾತ್ವಿಕ ಆದರ್ಶವನ್ನು ವರ್ತಮಾನದ ಸ್ಥಿತಿಗತಿಗಳಿಗೆ ತಕ್ಕಂತೆ ಅನ್ವಯಿಸಿಕೊಳ್ಳುವ ನಮ್ಯತೆಯ ಹೆಜ್ಜೆಗಳನ್ನೇ ಅನುಸರಿಸದೇ ಸಾರಾಸಗಟಾಗಿ ತಿರಸ್ಕಾರದ ಭಾವನೆಗಳು ನೆಲೆಗೊಂಡರೆ ಪ್ರಯೋಜನವಿಲ್ಲ.
ಅಹಿಂಸೆ : ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆ..?
ಈಗಿನ ರಾಜಕೀಯ ಹೇಳಿಕೆಗಳು ಇಂಥ ತಿರಸ್ಕಾರದ ಭಾವನೆಗಳ ಆಧಾರದಲ್ಲಿಯೇ ರೂಪುಗೊಳ್ಳುತ್ತಿವೆ. ಅವುಗಳು ಜನರ ಅಭಿಪ್ರಾಯಗಳನ್ನೂ ನಿಯಂತ್ರಿಸುತ್ತಿವೆ. ಗಾಂಧಿ ಮತ್ತು ಅಹಿಂಸಾ ತಾತ್ವಿಕತೆಯ ಬಗ್ಗೆ ಹೊಸ ಪೀಳಿಗೆಯು ಅರ್ಧಂಬರ್ಧ ತಿಳಿದುಕೊಂಡ ಸಂದರ್ಭದಲ್ಲಿ ಪ್ರಬಲ ಕೇಂದ್ರಗಳು ಹಿಂಸೆಯೊಂದಿಗಿನ ಕಾರ್ಯತಂತ್ರಗಳನ್ನು ಪ್ರಯೋಗಿಸಿ ಯಶಸ್ಸು ಕಂಡುಕೊಳ್ಳುತ್ತವೆ. ಈ ಕಾರ್ಯತಂತ್ರಗಳನ್ನು ಅಧಿಕಾರ ಕೇಂದ್ರಗಳು ಸಂಘಟನೆಗಳ ನೆರವಿನೊಂದಿಗೆ ಪ್ರಯೋಗಿಸುತ್ತವೆ. ಈಗಾಗಲೇ ಆಗಿಹೋದ ಇತಿಹಾಸ, ಗಾಂಧಿಯೂ ಸೇರಿದಂತೆ ವಿವಿಧ ದಾರ್ಶನಿಕರ ಕುರಿತಾದ ಸಮಗ್ರ ವಿವರಗಳು ಮತ್ತು ತಾತ್ವಿಕತೆಯ ಶಕ್ತಿಯ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡಿರದ ಜನಸಮೂಹದ ಅಜ್ಞಾನವನ್ನು ತಮ್ಮ ರಹಸ್ಯ ಕಾರ್ಯಸೂಚಿಗಳ ಯಶಸ್ವಿಗೆ ಪೂರಕವಾಗಿ ಬಳಸಿಕೊಳ್ಳುತ್ತವೆ. ಇಂದು ಬಹುತೇಕ ಯುವಕರು ಹಿಂಸೆ ಮತ್ತು ಅಹಿಂಸೆಯನ್ನು ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆಯಲ್ಲಿ ಚರ್ಚೆಗೊಳಪಡಿಸುತ್ತಿದ್ದಾರೆ. ಇದರರ್ಥ ಐವತ್ತು ಪರ್ಸೆಂಟ್ ಹಿಂಸೆ, ಐವತ್ತು ಪರ್ಸೆಂಟ್ ಅಹಿಂಸೆ ಇರಬೇಕು, ಅಂದಾಗಲೇ ಬ್ಯಾಲೆನ್ಸ್ ಆಗುತ್ತದೆ ಎಂಬ ಸಂಕುಚಿತತೆಯ ವಾದಗಳನ್ನು ಮುಂದಿಡುತ್ತಿದ್ದಾರೆ. ಹಿಂಸಿಸುವ ಪ್ರಾಬಲ್ಯ ನಮ್ಮ ಜೊತೆಗಿದ್ದರೆ ಉಳಿದವರು ಭಯಪಡುತ್ತಾರೆ ಎಂದು ಹಿರಿಯರ ಮುಂದೆ ಅಪ್ರಬುದ್ಧ ಮಾತುಗಳನ್ನಾಡುತ್ತಿದ್ದಾರೆ. ಅವರೊಂದಿಗೆ ಚರ್ಚಿಸುವ ಉತ್ಸಾಹದಲ್ಲಿ ಗಾಂಧಿ ವ್ಯಕ್ತಿತ್ವ, ಅವರು ಪ್ರತಿಪಾದಿಸಿದ ಅಹಿಂಸಾ ಮೌಲ್ಯ, ಭಾರತದ ಸ್ವಾತಂತ್ರ್ಯದ ಹೋರಾಟದಲ್ಲಿ ಅದು ನಿರ್ವಹಿಸಿದ ಮೌಲಿಕ ಪಾತ್ರ, ವರ್ತಮಾನದಲ್ಲಿ ಅದು ಅನ್ವಯಗೊಳ್ಳಬೇಕಾದ ಅವಶ್ಯಕತೆಗಳ ಬಗ್ಗೆ ಮಾತನಾಡಿದರೆ ಆ ಅಂಶಗಳನ್ನು ಆ ಕ್ಷಣಕ್ಕೆ ಸಂಕುಚಿತವಾಗಿ ಅರ್ಥೈಸಿಕೊಂಡು ಅಪ್ರಸ್ತುತವೆನ್ನಿಸುವ, ಅವಿವೇಕತನದ ವಾದವನ್ನು ಮುಂದಿಡುತ್ತಿದ್ದಾರೆ. ಮುಖ್ಯವಾಹಿನಿಯ ಮಾಧ್ಯಮಗಳ ಒಳಗೂ ಇಂಥ ವಾದಗಳನ್ನು ನೆಚ್ಚಿಕೊಂಡವರು ಇರುವುದರಿಂದ ಗಾಂಧಿ ಕುರಿತಾದ ಸಮಗ್ರ ಅರ್ಥೈಸಿಕೊಳ್ಳುವಿಕೆಯ ಜವಾಬ್ದಾರಿಯುತ ನಡೆಗಳು ಹಿನ್ನಡೆ ಅನುಭವಿಸುವಂಥ ಸ್ಥಿತಿ ನಿರ್ಮಾಣವಾಗಿದೆ.
ಅಹಿಂಸೆಯ ಸಾರ್ವಕಾಲಿಕತೆಯ ನಿದರ್ಶನಗಳು
ಇತಿಹಾಸದ ಪುಟಗಳಲ್ಲಿ ಅಹಿಂಸೆಯ ಸಾರ್ವಕಾಲಿಕತೆಯ ಶ್ರೇಷ್ಠ ನಿದರ್ಶನಗಳು ದಾಖಲಾಗಿವೆ. ಅವುಗಳು ವರ್ತಮಾನದ ಪೀಳಿಗೆಯ ಪ್ರಜ್ಞೆಯ ಅಂತಸತ್ವವನ್ನು ಮತ್ತಷ್ಟು ಪ್ರಖರಗೊಳಿಸುವ ರೀತಿಯಲ್ಲಿ ಮೇಳೈಸಿಕೊಳ್ಳಬೇಕು. ಆದರೆ, ಮೌಲಿಕ ಆದರ್ಶ ಹೆಜ್ಜೆಗಳು ಮತ್ತು ಅವುಗಳೊಂದಿಗಿನ ಇತಿಹಾಸದ ಅರಿವು ತಂದುಕೊಳ್ಳುವ ಯಾವುದೇ ಪ್ರಯತ್ನಗಳಲ್ಲಿ ತೊಡಗಿಕೊಳ್ಳದೇ ಅಗ್ರೆಸ್ಸಿವ್ ನಡವಳಿಕೆಗಳನ್ನೇ ಬಂಡವಾಳವಾಗಿಸಿಕೊಳ್ಳುತ್ತಿರುವ ಯುವ ಸಮೂಹವು ಪ್ರಬಲ ಶಕ್ತಿಗಳು ಸಾಕಿಕೊಳ್ಳುವ ರಾಜಕೀಯ ಪಕ್ಷಗಳ
ಕಾರ್ಯಕರ್ತರಾಗುವುದಕ್ಕಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಂಡಿದೆ. ಹಿಂದಿನದ್ದನ್ನು ಅರಿತುಕೊಳ್ಳುವ ಸಂಯಮ, ಯಾರು ಯಾರನ್ನು ದಾರಿ ತಪ್ಪಿಸಿ ತಮ್ಮ ಶಕ್ತಿ ಸಂಪನ್ಮೂಲವನ್ನು ಯಾವ ಬಗೆಯ ಸಂಘರ್ಷಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂಬುದರ ಕುರಿತಾದ ಸ್ಪಷ್ಟ ತಿಳುವಳಿಕೆ, ಆ ಮೂಲಕ ಅಹಿಂಸೆಯೊಂದಿಗಿನ ಗಾಂಧಿವಾದವನ್ನು ಮುನ್ನೆಲೆಗೆ ತರುವಂಥ ಆದರ್ಶಯುತ ಹೆಜ್ಜೆಗಳೊಂದಿಗೆ ಗುರುತಿಸಿಕೊಳ್ಳಬಹುದಾದ ಅವಕಾಶವನ್ನೇ ಬಿಟ್ಟುಕೊಟ್ಟಿದೆ. ಈ ಕಾರಣಕ್ಕಾಗಿಯೇ ಯಾವುದು ಸರಿ, ಯಾವುದು ತಪ್ಪು ಎಂಬ ವಿವೇಚನೆಯ ಬದಲು ಅಧಿಕಾರ ಸಂರಚನೆಯ ಕೇಂದ್ರಗಳನ್ನು ಬಲಪಡಿಸಿ ತಮ್ಮ ತಾತ್ಪೂರ್ತಿಕ ಆಸೆಗಳನ್ನು ಅವರು ಈಡೇರಿಸಿಕೊಳ್ಳುತ್ತಿದ್ದಾರೆ. ಬೈಕ್ ಕೊಳ್ಳಬೇಕು, ಕಾರ್ ಜೊತೆಗಿರಿಸಿಕೊಂಡು ಪ್ರತಿಷ್ಠೆ ಮೆರೆಯಬೇಕು, ಸುಸಜ್ಜಿತ ಮನೆ ಹೊಂದಬೇಕು, ಐಷಾರಾಮಿ ಬದುಕು ತಮ್ಮದಾಗಿಸಿಕೊಳ್ಳಬೇಕು – ಇಂಥವೇ ತಾತ್ಪೂರ್ತಿಕ ಆಸೆಗಳನ್ನು ಈಡೇರಿಸಿಕೊಳ್ಳುವುದಕ್ಕೆ ಕಾರ್ಯಕರ್ತರಿಗೆ ಹಂತಹಂತವಾಗಿ ರಾಜಕೀಯ ಪಕ್ಷಗಳು ನೆರವಾಗುತ್ತವೆ. ಅಧಿಕಾರದ ಗಮ್ಯ ತಲುಪಿಕೊಳ್ಳಲು ಇವು ಸಂಘರ್ಷ ಸೃಷ್ಟಿಗೆ ಇಂಥ ಯುವ ಸಮೂಹವನ್ನೇ ಬಳಸಿಕೊಳ್ಳುತ್ತವೆ. ಆಗ ಹಿಂಸೆಯೇ ವ್ಯಾಪಕವಾಗುತ್ತದೆ. ಅಹಿಂಸೆಯ ತಾರ್ಕಿಕವಾದವನ್ನೇ ಅಲ್ಲಗಳೆಯುವಂಥ ವಾತಾವರಣವನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಗುತ್ತದೆ.
ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳು
ನಾವು ಎಷ್ಟೇ ಕೃತಿಗಳನ್ನು ಓದಿಕೊಂಡರೂ, ತಜ್ಞರ ಬರಹಗಳನ್ನು ಗೊತ್ತುಮಾಡಿಕೊಂಡರೂ ಗಾಂಧೀಜಿಯವರ ಅಹಿಂಸೆಯ ತಾತ್ವಿಕ ದಾರ್ಶನಿಕ ನದಿಯ ಜೀವಜಲದ ಬೊಗಸೆಯಷ್ಟು ಹನಿಗಳನ್ನಷ್ಟೇ ದಕ್ಕಿಸಿಕೊಂಡಿರುತ್ತೇವೆ. ಅದರ ಜೀವಂತಿಕೆಯ ಸಮಗ್ರ ಅಮೃತಧಾರೆಯನ್ನು ನಮ್ಮೊಳಗಿಳಿಸಿಕೊಳ್ಳುವ ನಿರಂತರ ಪ್ರಯತ್ನಗಳ ಮೂಲಕವೇ ಆ ತಾತ್ವಿಕತೆಯ ಹೊಳೆಯು ಮನುಷ್ಯಸಮೂಹದೊಳಗೆ ನೆಲೆಗೊಳ್ಳುತ್ತಾ ತನ್ನ ನಡಿಗೆಯನ್ನು ಮೂಡಿಸುತ್ತಾ ಸಾಗುತ್ತದೆ. ಅದು ಸಾಗಿದಲ್ಲೆಲ್ಲಾ ಮನುಷ್ಯತ್ವ ಮತ್ತು ಜೀವಪರ ನಿಲುವುಗಳ ಫಲವತ್ತತೆಯು ವ್ಯಾಪಕವಾಗುತ್ತಿರುತ್ತದೆ. ಆದರೆ, ಇಂಥ ತಾತ್ವಿಕ ನದಿಯ ಹರಿವನ್ನು ಅರ್ಧಕ್ಕೆ ತಡೆಗಟ್ಟಿ ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳನ್ನು ಕಟ್ಟಲಾಗುತ್ತಿದೆ. ಈ ಅಣೆಕಟ್ಟುಗಳೇ ಸುಖ, ಶಾಂತಿ, ನೆಮ್ಮದಿಯೊಂದಿಗಿನ ಅಭ್ಯುದಯದ ಬೆಳೆ ಬೆಳೆಯುವುದಕ್ಕೆ ಸಹಕಾರಿಯಾಗುತ್ತವೆ ಎಂಬ ತಪ್ಪುಕಲ್ಪನೆಯನ್ನೇ ಬಿತ್ತಿ ನಂಬಿಸಲಾಗುತ್ತಿದೆ. ಇಂಥ ಸಂಕೀರ್ಣತೆಯ ಮಧ್ಯೆ ಅಹಿಂಸೆಯ ಜೀವನದಿ ಬತ್ತದಂತೆ, ಅದು ಕಾಲದಿಂದ ಕಾಲಕ್ಕೆ ಅತ್ಯಂತ ಎಚ್ಚರದೊಂದಿಗೆ ದಾಟಿಕೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸುವ ಹೊಸದೊಂದು ಪರ್ಯಾಯ ರಾಜಕಾರಣದ ಮಾದರಿ ರೂಪುಗೊಳ್ಳಬೇಕಾಗಿದೆ. ಅದಕ್ಕಿಂತ ಮುಂಚೆ ಅಹಿಂಸೆಯ ತಾತ್ವಿಕ ನದಿಯ ಹರಿವು ನಿಲ್ಲಿಸುತ್ತಿರುವ ಶಕ್ತಿಗಳನ್ನು ಸ್ಪಷ್ಟವಾಗಿ ಅರ್ಥೈಸಿಕೊಳ್ಳಬೇಕಾಗಿದೆ. ಆ ಶಕ್ತಿಗಳು ಈ ನದಿಯನ್ನು ಬತ್ತಿಸುವ ಪ್ರಯತ್ನದಲ್ಲಿ ತೊಡಗಿವೆ. ಅದರ ಚಲನೆಯ ಹರಿವಿನೊಳಗೆ ರಕ್ತಪಾತ ನಡೆಸಿ ಭಯ ಹುಟ್ಟಿಸಿ ತಾವು ಪ್ರಬಲರಾಗುವ ಸ್ವಹಿತಾಸಕ್ತಿಗಳನ್ನು ಕಾಯ್ದುಕೊಳ್ಳುತ್ತಿವೆ. ಜನರನ್ನು ಮರಳು ಮಾಡುವ ಮರಳುಗಾರಿಕೆಯನ್ನು ಇದೇ ಆವರಣದಲ್ಲಿಯೇ ಅತ್ಯಂತ ಚಾಣಾಕ್ಷತನದಿಂದ ನಿರ್ವಹಿಸುತ್ತಿವೆ. ಇದಕ್ಕೆ ಪರ್ಯಾಯವಾಗಿ ಅಪ್ಪಟ ಸಾತ್ವಿಕತೆಯೊಂದಿಗಿನ ರಾಜಕಾರಣ ರೂಪುಗೊಳ್ಳಬೇಕು. ಅಹಿಂಸೆಯು ಸಾರ್ವಕಾಲಿಕ ಸತ್ಯ. ಹಾಗಾಗಿಯೇ ಎಲ್ಲ ಕಾಲದ ಕೊಳಕುಗಳೊಂದಿಗೆ ಎದುರುಗೊಳ್ಳುತ್ತಲೇ ಅದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುತ್ತದೆ. ಅದು ಎಂದಿಗೂ ಬತ್ತದ ನದಿಯ ನಿನಾದದ ಹಾಗೆ. ಪ್ರಾಕೃತಿಕ ವಿಕೋಪಗಳಾದಾಗ ಅದರ ನಡಿಗೆಗೆ ಅಡ್ಡಿ-ಆತಂಕಗಳು ಎದುರಾಗುವ ಹಾಗೆ ಇದೀಗ ಪ್ರಬಲ ಶಕ್ತಿಗಳ ಉದ್ದೇಶಪೂರ್ವಕ ನಕಾರಾತ್ಮಕತೆಯ ಕಾರಣಕ್ಕಾಗಿ ಹಿಂಸೆಯೇ ಸರಿಯಾದದ್ದು ಎಂಬ ಸಂಕುಚಿತ ಅಭಿಪ್ರಾಯ ಮುನ್ನೆಲೆಗೆ ಬಂದಿದೆ. ಇದನ್ನು ಅಲ್ಲಗಳೆದು ಅಹಿಂಸೆಯೇ ನಿರ್ಣಾಯಕ, ಅದರ ಆಧಾರದಲ್ಲಿಯೇ ನವಭಾರತದ ನಿರ್ಮಾಣ ಎಂಬ ದೃಢಸಂಕಲ್ಪದೊಂದಿಗಿನ ಸನ್ಮತಿಯ ರಾಜಕಾರಣ ಶುರುವಾಗಬೇಕಿದೆ. ಅಹಿಂಸೆಯ ನಿನಾದದ ಮಾಧುರ್ಯದ ಮಾದರಿ ಜಗತ್ತನ್ನು ಸ್ವಚ್ಛಗೊಳಿಸಬೇಕಿದೆ.
-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ
‘ಮತದಾರ ದೇವರು’ ಎಂದ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮೇರು ನಟ ಡಾ.ರಾಜ್ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ಮತದಾರ ದೇವರು”. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ ಎಂದರು.
ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.
ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.
ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.
ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.
ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.
ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್.
ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ
ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ.
ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.
ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸುವ ವ್ಯರ್ಥಪ್ರಯತ್ನವನ್ನು ನಾನು ಮಾಡುವುದಿಲ್ಲ. ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.
ಜಾತಿ, ದುಡ್ಡು ಮತ್ತು ತೋಳ್ಬಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.
ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.
ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.
ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.
ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.
ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.
ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.
ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.
ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.
ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.
ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ.. ಮತ್ತೊಮ್ಮೆ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮಗಳಲ್ಲಿ ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗ್ರಾಮ ಆಡಳಿತಾಧಿಕಾರಿ ಕೋಸಗಿ ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹುಲಿಕಟ್ಟೆ ಸರ್ಕಲ್ ವ್ಯಾಪ್ತಿಯ ಹಾರಕನಾಳು, ಹುಲಿಕಟ್ಟೆ, ಚನ್ನಳ್ಳಿ ತಾಂಡ, ಈಶಾಪುರ, ಹಾರಕನಾಳು ಸಣ್ಣತಾಂಡ, ಹಾರಕನಾಳು ದೊಡ್ಡತಾಂಡ, ಕನ್ನಾಯಕನಹಳ್ಳಿ ಸೇರಿ ಒಟ್ಟು 07 ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೋಸಗಿ ಸುರೇಶ ಎಂಬುವವರು ರೈತರೊಂದಿಗೆ ಒಪ್ಪಂದ ಮಾಡಿಕೊಂಡು, ಪ್ರತಿ ವರ್ಷ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಬೆಳೆಗಳಿಗೆ ತಾವೇ ಎಲ್ಲಾ ರೈತರ ಜಮೀನಿಗೆ ಬೆಳೆ ವಿಮೆ ಹಣ ಪಾವತಿಸುವ ಮೂಲಕ ನಿರಂತರವಾಗಿ 3 ವರ್ಷಗಳಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿಗಳನ್ನು ವಂಚಿಸುತ್ತ ಬಂದಿರುವ ಮಾಹಿತಿಯು ಸಾಕಷ್ಟು ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ. ಈ ಬಗ್ಗೆ ರೈತರು ಸಾಕಷ್ಟು ಪ್ರತಿಭಟನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೂ ದೂರು ನೀಡಿರುತ್ತಾರೆ.
ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯಲ್ಲಿನ ಭ್ರಷ್ಟಚಾರದ ಪ್ರಮುಖ ರೂವಾರಿಯಾದ ಕೋಸಗಿ ಸುರೇಶ ಎಂಬುವವರು ತಾವು ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಗುಂಡಗತ್ತಿ ಸರ್ಕಲ್ ವ್ಯಾಪ್ತಿಯ ಬಹು ಗ್ರಾಮಗಳಲ್ಲಿಯೂ ಫಸಲ್ ಭೀಮಾ ಯೋಜನೆಯಲ್ಲಿ (ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ) ಸಾಕಷ್ಟು ಅವ್ಯವಹಾರ ನಡೆಸುತ್ತ ಬಂದಿರುತ್ತಾರೆ ಎಂಬ ಅಧಿಕೃತ ಮಾಹಿತಿ ಇರುತ್ತದೆ. ಇವರು ತಾವು ಕೆಲಸ ಮಾಡಿದ ಎಲ್ಲಾ ಸ್ಥಳಗಳಲ್ಲಿಯೂ ಸಾಕಷ್ಟು ಅವ್ಯವಹಾರದಲ್ಲಿ ಭಾಗಿಯಾಗಿದ್ದು, ಸಾಕಷ್ಟು ರೈತರಿಗೆ ಸರ್ಕಾರಿ ಯೋಜನೆಗಳನ್ನು ಮಾಡಿಸಿಕೊಡುವುದಾಗಿ ಕೋಟ್ಯಾಂತರ ರೂಪಾಯಿ ಲಂಚ ಪಡೆದಿರುತ್ತಾರೆ. ಹಾಗೆಯೇ ಬಡವರು, ಅಸಹಾಯಕರ ಜಮೀನುಗಳನ್ನು ಪ್ರಬಲರ ಹೆಸರಿಗೆ ವರ್ಗಾಹಿಸುವ ನೀಚ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ.
ಬಡವರ ಜಮೀನುಗಳನ್ನು ಪ್ರಬಲರ ಹೆಸರಿಗೆ ಮಾಡಿದ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದು ನಂತರ ಮೂಲ ಖಾತೆದಾರರಿಗೆ ವರ್ಗಾವಣೆಯಾಗಿರುವ ಸಾಕಷ್ಟು ನಿದರ್ಶನಗಳಿಗೆ. ಆದರೆ ಯಾವುದೇ ಒಂದು ಪ್ರಕರಣದಲ್ಲಿಯೂ ಈ ಅಧಿಕಾರಿಗೆ ಶಿಕ್ಷೆಯಾಗದಂತೆ ಹಿರಿಯ ಅಧಿಕಾರಿಗಳರಿವರನ್ನು ಕಾಪಾಡಿಕೊಂಡು ಬಂದಿರುತ್ತಾರೆ. ಈ ಕಾರಣಕ್ಕಾಗಿಯೇ ಫಸಲ್ ಭೀಮಾ ಯೋಜನೆಯಂತಹ ದೊಡ್ಡ ಮಟ್ಟದ ಹಗರಣಕ್ಕೂ ಮುಂದಾಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳನ್ನು ಆಧಾರವಾಗಿಟ್ಟುಕೊಂಡು ಫಸಲ್ ಭೀಮಾ ಯೋಜನೆಯ ಅವ್ಯವಹಾರದಲ್ಲಿ ಭಾಗಿಯಾಗಿರುವ ಹಾರಕನಾಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಎಂ.ಶಿವಣ್ಣ, ಕಂದಾಯ ನಿರೀಕ್ಷಕ ಶ್ರೀ ರಾಘವೇಂದ್ರ, ಹರಪನಹಳ್ಳಿ ತಾಲ್ಲೂಕು ಉಪ ತಹಶೀಲ್ದಾರರಾದ ಶ್ರೀಮತಿ ಕವಿತಾ, ತಹಶೀಲ್ದಾರರಾದ ಶ್ರೀ ಬಿ.ವಿ. ಗಿರೀಶ್ಬಾಬು, ಉಪವಿಭಾಗಾಧಿಕಾರಿಯಾದ ಶ್ರೀ ಸುರೇಶ್ಕುಮಾರ್ ಟಿ, ಹರಪನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ವೈ.ಹೆಚ್. ಚಂದ್ರಶೇಖರ್, ವಿಜಯನಗರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕವಿತಾ ಮನ್ನಿಕೇರಿ ಇವರುಗಳ ವಿರುದ್ಧ ದೂರು ದಾಖಲಿಸಿ, ಈ ಎಲ್ಲಾ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ ಎಂಬುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ತನ್ನ 75 ವರ್ಷಗಳ ಅತ್ಯುತ್ತಮ ಶೈಕ್ಷಣಿಕ ಸೇವೆಯ ನೆನಪಿಗಾಗಿ (1951-2026) ಹಮ್ಮಿಕೊಂಡಿರುವ ಭವ್ಯ “ವಜ್ರ ಮಹೋತ್ಸವ ಕಾರ್ಯಕ್ರಮವು ಮೇ 29 ಮತ್ತು 30 ರಂದು ಕಾಲೇಜಿನ ಆವರಣದಲ್ಲಿ ಜರುಗಲಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಂಗಸಂಸ್ಥೆಯಾಗಿರುವ ಈ ಕಾಲೇಜಿನ ಉದ್ಘಾಟನಾ ಸಮಾರಂಭವು ಮೇ 29 ರ ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಆರಂಭವಾಗಲಿದ್ದು, ದೇಶ ಹಾಗೂ ರಾಜ್ಯದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಸಿ. ಪಿ. ರಾಧಾಕೃಷ್ಣನ್, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿ.ಟಿ.ಯು. ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಗಣಿ ಮತ್ತು ಭೂ ವಿಜ್ಞಾನ , ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಮಂಡಳಿ (FTE&M) ಅಧ್ಯಕ್ಷರಾದ ಪ್ರೊ. ಟಿ. ಜಿ. ಸಿತಾರಾಮ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ವಿ.ಟಿ.ಯು ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್, ರಿಜಿಸ್ಟ್ರಾರ್ ಡಾ. ಪ್ರಸಾದ್ ಬಿ ರಾಂಪುರೆ , ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಉಜ್ವಲ್ ಯು.ಜೆ , ಹಣಕಾಸು ಅಧಿಕಾರಿ ಡಾ. ಪ್ರಶಾಂತ್ ನಾಯಕ್ , ಯು.ಬಿ.ಡಿ.ಟಿ.ಇ ಪ್ರಾಂಶುಪಾಲರಾದ ಡಾ. ಡಿ. ಪಿ. ನಾಗರಾಜಪ್ಪ ಮತ್ತು ವಿವಿ ಪದಾಧಿಕಾರಿಗಳು ಕಾರ್ಯಕ್ರಮದ ಆತಿಥ್ಯ ವಹಿಸಲಿದ್ದಾರೆ.
ವಿಶೇಷ ಅತಿಥಿಗಳಾಗಿ ಶಾಸಕರುಗಳಾದ ಶಾಂತನಗೌಡ ಡಿ.ಜಿ., ಬಿ. ದೇವೇಂದ್ರಪ್ಪ, ಬಿ. ಪಿ. ಹರೀಶ್, ಶ್ರೀ ಬಸವರಾಜು ವಿ. ಶಿವಗಂಗಾ, ಕೆ. ಎಸ್. ಬಸವಂತಪ್ಪ, ಸಮರ್ಥ್ ಶಾಮನೂರು, ವಿಧಾನಪರಿಷತ್ ಸದಸ್ಯರುಗಳಾದ ಎಸ್.ಎಲ್. ಭೋಜೆಗೌಡ, ಡಿ.ಎಸ್.ಅರುಣ್, ಡಾ. ಧನಂಜಯ್ ಸರ್ಜಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಹಾಗೂ ಚಳ್ಳಕೆರೆ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಾಲೇಜಿನ ಹಳೆಯ ವಿದ್ಯಾರ್ಥಿ ಟಿ. ರಘುಮೂರ್ತಿ , ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಕಾಲೇಜಿನ ಹಳೆಯ ವಿದ್ಯಾರ್ಥಿ ಜನಾರ್ಧನ ಸ್ವಾ̧ಮಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
-
ದಿನದ ಸುದ್ದಿ5 days agoದಾವಣಗೆರೆ | ಇಂದು ಕರೆಂಟ್ ಇರಲ್ಲ
-
ದಿನದ ಸುದ್ದಿ2 days ago‘ಮತದಾರ ದೇವರು’ ಎಂದ ಸಿದ್ದರಾಮಯ್ಯ



