Connect with us

ರಾಜಕೀಯ

ಅಹಿಂಸೆ : ಎಂದಿಗೂ ಬತ್ತದ ನದಿಯ ನಿನಾದ

Published

on

ಸಂಘರ್ಷವನ್ನು ಸ್ಥಾಯಿಯಾಗಿಸಿ ಪ್ರಯೋಜನ ಪಡೆದುಕೊಳ್ಳುವ ಪ್ರಯತ್ನಗಳು ನಿರಂತರವಾಗಿ ಯಶಸ್ಸು ಕಾಣುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅಹಿಂಸೆಯ ಮೌಲ್ಯದ ಆಧಾರದಲ್ಲಿ ಪರ್ಯಾಯ ರಾಜಕಾರಣ ರಾಷ್ಟ್ರದಾದ್ಯಂತ ರೂಪುಗೊಳ್ಳಬೇಕಾದ ಅನಿವಾರ್ಯತೆಯನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ಕಾಡಿಸಿಕೊಳ್ಳಬೇಕಿದೆ. ದೇಶವೊಂದು ಇನ್ನೊಂದು ರಾಷ್ಟ್ರದ ಕುರಿತು ಸಿಟ್ಟಿಗೇಳುವಿಕೆ ಜಾಗತಿಕ ಮಟ್ಟದ ಸಂಘರ್ಷವನ್ನು ಸಂಕೇತಿಸಿದರೆ, ಜನರ ನಡುವೆಯೇ ನಡೆಯುವ ಜಗಳಗಳು ಆಂತರಿಕ ವ್ಯಗ್ರತೆಗೆ ಸಾಕ್ಷಿಯಾಗುತ್ತವೆ. ವಿವಿಧ ಸ್ತರಗಳಲ್ಲಿ ವ್ಯಗ್ರತೆಯು ವ್ಯಕ್ತಿಯೊಳಗೆ ಮೇಳೈಸಿಕೊಳ್ಳುತ್ತದೆ. ಅದು ವಿವಿಧ ವರ್ತನೆಗಳಲ್ಲಿ ವ್ಯಕ್ತವಾಗುತ್ತದೆ. ಆ ವರ್ತನೆಗಳು ಉಂಟುಮಾಡುವ ಪರಿಣಾಮಗಳು ವ್ಯಕ್ತಿಗತ ಹಾಗೂ ಸಾಮೂಹಿಕ ಸಂಘರ್ಷಗಳ ರೂಪದಲ್ಲಿ ಕಂಡುಬರುತ್ತವೆ. ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಅಧಿಕಾರ ಕೇಂದ್ರಗಳು ಈ ರೂಪಗಳನ್ನು ತಮ್ಮ ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಅತ್ಯಂತ ಚಾಣಾಕ್ಷಯುತವಾಗಿ ಬಳಸಿಕೊಳ್ಳುತ್ತವೆ. ದೇಶ, ಧರ್ಮ ಮತ್ತು ಜಾತಿಯ ಅಸ್ಮಿತೆಯ ಪ್ರಶ್ನೆಗಳನ್ನು ಮುನ್ನೆಲೆಗೆ ತಂದು ತಮ್ಮ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ರಾಜಕಾರಣ ಅತ್ಯಂತ ಯಶಸ್ವಿಯಾಗಿ ನಿಭಾಯಿಸಲ್ಪಡುತ್ತದೆ.

ಪ್ರಜಾಪ್ರಭುತ್ವವಾದಿ ಆಡಳಿತ ವಿನ್ಯಾಸಗೊಳಿಸಗೊಳಿಸಿಕೊಂಡಿರುವ ಅಭಿವೃದ್ಧಿ ಮತ್ತು ಅದಕ್ಕೆ ಸಂಬಂಧಿಸಿದ ಪರಿಕಲ್ಪನೆಗಳು ಅಂಥ ರಾಜಕಾರಣಕ್ಕೆ ಪೂರಕವಾಗಿರುವಂತೆಯೇ ಪಾತ್ರವನ್ನು ನಿರ್ವಹಿಸುತ್ತಿವೆ. ಟೊಳ್ಳುತನದ ಸಂಗತಿಗಳೊಂದಿಗೆ ಅಭಿವೃದ್ದಿಯನ್ನು ವ್ಯಾಖ್ಯಾನಿಸುವ ಪ್ರವೃತ್ತಿಯನ್ನು ಸಾರ್ವತ್ರಿಕಗೊಳಿಸುವ ಈ ಅಭಿವೃದ್ಧಿಯು ಅದಕ್ಕೆ ಸಹಕಾರಿಯಾಗಿರುತ್ತದೆ. ಪ್ರಶ್ನಿಸುವ ಬದಲಾಗಿ ಆ ಸಂಕುಚಿತ ರಾಜಕಾರಣವು ಅಧಿಕಾರ ಮತ್ತು ಪ್ರಭಾವವನ್ನು ಸ್ಥಿರವಾಗಿರಿಸಿಕೊಂಡು ಬಹುದೊಡ್ಡ ಸಾಮಾಜಿಕ ಪಲ್ಲಟದ ಸಾಧ್ಯತೆಗಳನ್ನು ಒಡೆಯುವುದರ ಕಡೆಗೆ ನಡೆದುಬಿಡುತ್ತದೆ. ಅಡ್ಡ ಎದುರಾಗುವವರನ್ನು ತಮ್ಮ ಪ್ರಭಾವೀ ಪ್ರಾಬಲ್ಯದ ಬಲದೊಂದಿಗೆ ಹತ್ತಿಕ್ಕಿಬಿಡುತ್ತದೆ. ಅಧಿಕಾರ ಕೇಂದ್ರಗಳ ಮೂಲಕ ದಾಟಿಕೊಂಡ ಶಿಕ್ಷಣವು ವ್ಯಕ್ತಿಗತ ಪ್ರಯೋಜನವಾದಿ ಯೋಚನೆಗಳನ್ನೇ ಬಿತ್ತುವುದರ ಕಡೆಗೆ ಆಸಕ್ತಿ ವಹಿಸುವುದರಿಂದ ಶಿಕ್ಷಿತ-ಸುಶಿಕ್ಷಿತ ವಲಯವೂ ಅನಕ್ಷರಸ್ತ ಸಮುದಾಯಗಳಲ್ಲಿರುವ ಮೌಢ್ಯವನ್ನೇ ಅಂತರ್ಗತ ಗುಣಲಕ್ಷಣವಾಗಿಸಿಕೊಳ್ಳುತ್ತದೆ. ಅದನ್ನು ಜನರೊಳಗೂ ವ್ಯಾಪಕವಾಗಿಸಲು ಪ್ರಯತ್ನಿಸುತ್ತದೆ. ಹೀಗಾದಾಗ ಹೊಸ ಪೀಳಿಗೆಯು ಅದರ ರಹಸ್ಯ ಕಾರ್ಯಸೂಚಿಯ ಭಾಗವಾಗಿರುವ ಅಪಮೌಲ್ಯೀಕೃತ ಅಂಶಗಳು ರೂಪಿಸುವ ಚೌಕಟ್ಟುಗಳಲ್ಲಿ ಬಂಧಿಯಾಗಿ ಯೋಚಿಸಲಾರಂಭಿಸುತ್ತದೆ.

ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳು

ಈ ಹಂತದಲ್ಲಿಯೇ ಸಂಘರ್ಷದ ಪರ ನಿಲ್ಲುವ ದೃಷ್ಟಿಕೋನಗಳನ್ನೇ ಮುಖ್ಯವಾಗಿಸಿಕೊಳ್ಳುತ್ತದೆ. ಅಹಿಂಸೆಯ ಮೌಲ್ಯದ ಸಕಾರಾತ್ಮಕತೆಯು ಹಿಂಸೆಯ ಪರವಾದ ವಿತಂಡವಾದಿ ಆಲೋಚನೆಗಳ ಭರಾಟೆಯಲ್ಲಿ ಹಿನ್ನೆಲೆಗೆ ಸರಿಯುತ್ತದೆ. ಇಂಥ ಸಂದರ್ಭದಲ್ಲಿ ಅಹಿಂಸಾತ್ಮಕ ಮನೋಧರ್ಮವನ್ನು ಮುನ್ನೆಲೆಗೆ ತಂದು ಅಧಿಕೃತಗೊಳಿಸುವ ಅಪ್ಪಟ ಪ್ರಯೋಗಶೀಲ ರಾಜಕಾರಣ ಮೊಳಕೆಯೊಡೆಯಬೇಕು. ಹಾಗಾಗುತ್ತಿಲ್ಲ. ಹಾಗಾಗುವುದಕ್ಕೆ ಸಾಮಾಜಿಕ, ರಾಜಕೀಯ, ಧಾರ್ಮಿಕ ಕೇಂದ್ರಗಳ ಮುಂಚೂಣಿ ಮುಖಂಡತ್ವ ಬಿಡುತ್ತಿಲ್ಲ. ತಾವು ಸಮಸ್ಯೆ ಎಂದು ಪರಿಭಾವಿಸಿಕೊಂಡಿರುವ ಜಟಿಲತೆಗೆ ಪ್ರಾಮಾಣಿಕವಾಗಿ ಪರಿಹಾರ ಹುಡುಕಿಕೊಳ್ಳುವ ಪ್ರಯತ್ನಗಳನ್ನೂ ನಡೆಸುತ್ತಿಲ್ಲ. ಅಂಥ ಪ್ರಾಮಾಣಿಕ ಹೆಜ್ಜೆಗಳು ಅಹಿಂಸೆಯ ಪರವಾದ ಅಲೆಯನ್ನು ಸೃಷ್ಟಿಸುವ ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳನ್ನು ಹೊಳೆಸುತ್ತವೆ. ಇದರ ಬದಲಾಗಿ ಮತ್ತೆ ಜಾತಿನಿಷ್ಠ ಮಿತಿಗಳನ್ನು ವಿಸ್ತರಿಸುವ, ಧರ್ಮದೊಳಗೆ ಇಲ್ಲದೇ ಇರುವ ಸಂಗತಿಗಳನ್ನು ಇತಿಹಾಸದೊಂದಿಗೆ ತಳುಕುಹಾಕುವ ಮತ್ತು ಅಂಥ ಸಂಕುಚಿತ ಪಠ್ಯಗಳ ಆಧಾರದಲ್ಲಿಯೇ ಅಧಿಕಾರ ರಾಜಕಾರಣವನ್ನು ಬದುಕಿಸಿಬಿಡುವ ಹುನ್ನಾರಗಳನ್ನು ಹೊಳೆಸಿಕೊಳ್ಳುವುದರ ಕಡೆಗೇ ಅತ್ಯುತ್ಸಾಹ ವ್ಯಕ್ತವಾಗುತ್ತಿದೆ. ಒಳ್ಳೆಯದನ್ನು ಹೇಳಿದರೆ ಸುಲಭಕ್ಕೆ ಒಪ್ಪಿಕೊಳ್ಳದ ಹಠಮಾರಿತನ ಅದರದ್ದು. ಗಾಂಧಿ ಜೀವಂತಗೊಳಿಸಿದ ಅಹಿಂಸೆಯ ಮಾದರಿಯ ಬಗ್ಗೆ ಪ್ರಸ್ತಾಪಿಸಿದರೆ ಅದು ದಿಢೀರನೆ ಅವಿವೇಕತನದ ಅತಿರೇಕವನ್ನು ಪ್ರದರ್ಶಿಸಿಬಿಡುತ್ತದೆ. ‘ಗಾಂಧಿ ಏನಿದ್ದರೂ ಆ ಕಾಲಕ್ಕೆ, ಈಗಲ್ಲ’ ಎಂದು ಉಡಾಫೆಯ ಮನೋಭಾವವನ್ನು ತೂರಿಬಿಡುತ್ತದೆ.
ಗಾಂಧಿಯ ವ್ಯಕ್ತಿತ್ವದೊಂದಿಗೇ ಬೆರೆತುಹೋಗಿದ್ದ ಅಹಿಂಸೆಯ ಮೌಲ್ಯವು ವರ್ತಮಾನದಲ್ಲಷ್ಟೇ ಅಲ್ಲ, ಭವಿಷ್ಯದ ಜಗತ್ತಿನ ಎಲ್ಲ ಬಗೆಯ ಸಂಘರ್ಷಗಳನ್ನು ಕೊನೆಗಾಣಿಸುವ ಪ್ರಾಕೃತಿಕ ದಿವ್ಯೌಷಧ ಎಂಬುದನ್ನು ಮನಗಾಣಲೇಬೇಕು. ಗಾಂಧಿಯನ್ನು ಅರ್ಥೈಸಿಕೊಳ್ಳದ ಮನಸ್ಸುಗಳು ಈ ಕ್ಷಣಕ್ಕೆ ತಮ್ಮ ಮೂಗಿನ ನೇರಕ್ಕೆ ತೀರ್ಮಾನವನ್ನು ಕೈಗೊಂಡುಬಿಡುತ್ತವೆ. ಸಂಪೂರ್ಣ ತಿಳುವಳಿಕೆ ಇಲ್ಲದೇ ರೂಪುಗೊಳ್ಳುವ ಅಂಥ ವ್ಯಕ್ತಿಗತ ನಿಲುವುಗಳು ಸಮೂಹಕ್ಕೂ ದಾಟಿಕೊಳ್ಳುತ್ತವೆ. ಗಾಂಧಿ ಮತ್ತು ಅವರು ಪ್ರತಿಪಾದಿಸಿದ ಅಹಿಂಸಾವಾದ ಅಪ್ರಸ್ತುತ ಎಂದು ಹೇಳುವ ಕಾಲಕ್ಕೆ ಅಹಿಂಸೆಯ ತಾತ್ವಿಕತೆಯೊಂದಿಗಿನ ಗಾಂಧಿ ವ್ಯಕ್ತಿತ್ವವನ್ನು ಸಮಗ್ರವಾಗಿ ತಿಳಿದುಕೊಳ್ಳುವ ಪ್ರಯತ್ನಗಳನ್ನೇ ನಡೆಸುವುದಿಲ್ಲ. ಆ ತಾತ್ವಿಕ ಆದರ್ಶವನ್ನು ವರ್ತಮಾನದ ಸ್ಥಿತಿಗತಿಗಳಿಗೆ ತಕ್ಕಂತೆ ಅನ್ವಯಿಸಿಕೊಳ್ಳುವ ನಮ್ಯತೆಯ ಹೆಜ್ಜೆಗಳನ್ನೇ ಅನುಸರಿಸದೇ ಸಾರಾಸಗಟಾಗಿ ತಿರಸ್ಕಾರದ ಭಾವನೆಗಳು ನೆಲೆಗೊಂಡರೆ ಪ್ರಯೋಜನವಿಲ್ಲ.

ಅಹಿಂಸೆ : ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆ..?

ಈಗಿನ ರಾಜಕೀಯ ಹೇಳಿಕೆಗಳು ಇಂಥ ತಿರಸ್ಕಾರದ ಭಾವನೆಗಳ ಆಧಾರದಲ್ಲಿಯೇ ರೂಪುಗೊಳ್ಳುತ್ತಿವೆ. ಅವುಗಳು ಜನರ ಅಭಿಪ್ರಾಯಗಳನ್ನೂ ನಿಯಂತ್ರಿಸುತ್ತಿವೆ. ಗಾಂಧಿ ಮತ್ತು ಅಹಿಂಸಾ ತಾತ್ವಿಕತೆಯ ಬಗ್ಗೆ ಹೊಸ ಪೀಳಿಗೆಯು ಅರ್ಧಂಬರ್ಧ ತಿಳಿದುಕೊಂಡ ಸಂದರ್ಭದಲ್ಲಿ ಪ್ರಬಲ ಕೇಂದ್ರಗಳು ಹಿಂಸೆಯೊಂದಿಗಿನ ಕಾರ್ಯತಂತ್ರಗಳನ್ನು ಪ್ರಯೋಗಿಸಿ ಯಶಸ್ಸು ಕಂಡುಕೊಳ್ಳುತ್ತವೆ. ಈ ಕಾರ್ಯತಂತ್ರಗಳನ್ನು ಅಧಿಕಾರ ಕೇಂದ್ರಗಳು ಸಂಘಟನೆಗಳ ನೆರವಿನೊಂದಿಗೆ ಪ್ರಯೋಗಿಸುತ್ತವೆ. ಈಗಾಗಲೇ ಆಗಿಹೋದ ಇತಿಹಾಸ, ಗಾಂಧಿಯೂ ಸೇರಿದಂತೆ ವಿವಿಧ ದಾರ್ಶನಿಕರ ಕುರಿತಾದ ಸಮಗ್ರ ವಿವರಗಳು ಮತ್ತು ತಾತ್ವಿಕತೆಯ ಶಕ್ತಿಯ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡಿರದ ಜನಸಮೂಹದ ಅಜ್ಞಾನವನ್ನು ತಮ್ಮ ರಹಸ್ಯ ಕಾರ್ಯಸೂಚಿಗಳ ಯಶಸ್ವಿಗೆ ಪೂರಕವಾಗಿ ಬಳಸಿಕೊಳ್ಳುತ್ತವೆ. ಇಂದು ಬಹುತೇಕ ಯುವಕರು ಹಿಂಸೆ ಮತ್ತು ಅಹಿಂಸೆಯನ್ನು ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆಯಲ್ಲಿ ಚರ್ಚೆಗೊಳಪಡಿಸುತ್ತಿದ್ದಾರೆ. ಇದರರ್ಥ ಐವತ್ತು ಪರ್ಸೆಂಟ್ ಹಿಂಸೆ, ಐವತ್ತು ಪರ್ಸೆಂಟ್ ಅಹಿಂಸೆ ಇರಬೇಕು, ಅಂದಾಗಲೇ ಬ್ಯಾಲೆನ್ಸ್ ಆಗುತ್ತದೆ ಎಂಬ ಸಂಕುಚಿತತೆಯ ವಾದಗಳನ್ನು ಮುಂದಿಡುತ್ತಿದ್ದಾರೆ. ಹಿಂಸಿಸುವ ಪ್ರಾಬಲ್ಯ ನಮ್ಮ ಜೊತೆಗಿದ್ದರೆ ಉಳಿದವರು ಭಯಪಡುತ್ತಾರೆ ಎಂದು ಹಿರಿಯರ ಮುಂದೆ ಅಪ್ರಬುದ್ಧ ಮಾತುಗಳನ್ನಾಡುತ್ತಿದ್ದಾರೆ. ಅವರೊಂದಿಗೆ ಚರ್ಚಿಸುವ ಉತ್ಸಾಹದಲ್ಲಿ ಗಾಂಧಿ ವ್ಯಕ್ತಿತ್ವ, ಅವರು ಪ್ರತಿಪಾದಿಸಿದ ಅಹಿಂಸಾ ಮೌಲ್ಯ, ಭಾರತದ ಸ್ವಾತಂತ್ರ್ಯದ ಹೋರಾಟದಲ್ಲಿ ಅದು ನಿರ್ವಹಿಸಿದ ಮೌಲಿಕ ಪಾತ್ರ, ವರ್ತಮಾನದಲ್ಲಿ ಅದು ಅನ್ವಯಗೊಳ್ಳಬೇಕಾದ ಅವಶ್ಯಕತೆಗಳ ಬಗ್ಗೆ ಮಾತನಾಡಿದರೆ ಆ ಅಂಶಗಳನ್ನು ಆ ಕ್ಷಣಕ್ಕೆ ಸಂಕುಚಿತವಾಗಿ ಅರ್ಥೈಸಿಕೊಂಡು ಅಪ್ರಸ್ತುತವೆನ್ನಿಸುವ, ಅವಿವೇಕತನದ ವಾದವನ್ನು ಮುಂದಿಡುತ್ತಿದ್ದಾರೆ. ಮುಖ್ಯವಾಹಿನಿಯ ಮಾಧ್ಯಮಗಳ ಒಳಗೂ ಇಂಥ ವಾದಗಳನ್ನು ನೆಚ್ಚಿಕೊಂಡವರು ಇರುವುದರಿಂದ ಗಾಂಧಿ ಕುರಿತಾದ ಸಮಗ್ರ ಅರ್ಥೈಸಿಕೊಳ್ಳುವಿಕೆಯ ಜವಾಬ್ದಾರಿಯುತ ನಡೆಗಳು ಹಿನ್ನಡೆ ಅನುಭವಿಸುವಂಥ ಸ್ಥಿತಿ ನಿರ್ಮಾಣವಾಗಿದೆ.

ಅಹಿಂಸೆಯ ಸಾರ್ವಕಾಲಿಕತೆಯ ನಿದರ್ಶನಗಳು

ಇತಿಹಾಸದ ಪುಟಗಳಲ್ಲಿ ಅಹಿಂಸೆಯ ಸಾರ್ವಕಾಲಿಕತೆಯ ಶ್ರೇಷ್ಠ ನಿದರ್ಶನಗಳು ದಾಖಲಾಗಿವೆ. ಅವುಗಳು ವರ್ತಮಾನದ ಪೀಳಿಗೆಯ ಪ್ರಜ್ಞೆಯ ಅಂತಸತ್ವವನ್ನು ಮತ್ತಷ್ಟು ಪ್ರಖರಗೊಳಿಸುವ ರೀತಿಯಲ್ಲಿ ಮೇಳೈಸಿಕೊಳ್ಳಬೇಕು. ಆದರೆ, ಮೌಲಿಕ ಆದರ್ಶ ಹೆಜ್ಜೆಗಳು ಮತ್ತು ಅವುಗಳೊಂದಿಗಿನ ಇತಿಹಾಸದ ಅರಿವು ತಂದುಕೊಳ್ಳುವ ಯಾವುದೇ ಪ್ರಯತ್ನಗಳಲ್ಲಿ ತೊಡಗಿಕೊಳ್ಳದೇ ಅಗ್ರೆಸ್ಸಿವ್ ನಡವಳಿಕೆಗಳನ್ನೇ ಬಂಡವಾಳವಾಗಿಸಿಕೊಳ್ಳುತ್ತಿರುವ ಯುವ ಸಮೂಹವು ಪ್ರಬಲ ಶಕ್ತಿಗಳು ಸಾಕಿಕೊಳ್ಳುವ ರಾಜಕೀಯ ಪಕ್ಷಗಳ
ಕಾರ್ಯಕರ್ತರಾಗುವುದಕ್ಕಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಂಡಿದೆ. ಹಿಂದಿನದ್ದನ್ನು ಅರಿತುಕೊಳ್ಳುವ ಸಂಯಮ, ಯಾರು ಯಾರನ್ನು ದಾರಿ ತಪ್ಪಿಸಿ ತಮ್ಮ ಶಕ್ತಿ ಸಂಪನ್ಮೂಲವನ್ನು ಯಾವ ಬಗೆಯ ಸಂಘರ್ಷಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂಬುದರ ಕುರಿತಾದ ಸ್ಪಷ್ಟ ತಿಳುವಳಿಕೆ, ಆ ಮೂಲಕ ಅಹಿಂಸೆಯೊಂದಿಗಿನ ಗಾಂಧಿವಾದವನ್ನು ಮುನ್ನೆಲೆಗೆ ತರುವಂಥ ಆದರ್ಶಯುತ ಹೆಜ್ಜೆಗಳೊಂದಿಗೆ ಗುರುತಿಸಿಕೊಳ್ಳಬಹುದಾದ ಅವಕಾಶವನ್ನೇ ಬಿಟ್ಟುಕೊಟ್ಟಿದೆ. ಈ ಕಾರಣಕ್ಕಾಗಿಯೇ ಯಾವುದು ಸರಿ, ಯಾವುದು ತಪ್ಪು ಎಂಬ ವಿವೇಚನೆಯ ಬದಲು ಅಧಿಕಾರ ಸಂರಚನೆಯ ಕೇಂದ್ರಗಳನ್ನು ಬಲಪಡಿಸಿ ತಮ್ಮ ತಾತ್ಪೂರ್ತಿಕ ಆಸೆಗಳನ್ನು ಅವರು ಈಡೇರಿಸಿಕೊಳ್ಳುತ್ತಿದ್ದಾರೆ. ಬೈಕ್ ಕೊಳ್ಳಬೇಕು, ಕಾರ್ ಜೊತೆಗಿರಿಸಿಕೊಂಡು ಪ್ರತಿಷ್ಠೆ ಮೆರೆಯಬೇಕು, ಸುಸಜ್ಜಿತ ಮನೆ ಹೊಂದಬೇಕು, ಐಷಾರಾಮಿ ಬದುಕು ತಮ್ಮದಾಗಿಸಿಕೊಳ್ಳಬೇಕು – ಇಂಥವೇ ತಾತ್ಪೂರ್ತಿಕ ಆಸೆಗಳನ್ನು ಈಡೇರಿಸಿಕೊಳ್ಳುವುದಕ್ಕೆ ಕಾರ್ಯಕರ್ತರಿಗೆ ಹಂತಹಂತವಾಗಿ ರಾಜಕೀಯ ಪಕ್ಷಗಳು ನೆರವಾಗುತ್ತವೆ. ಅಧಿಕಾರದ ಗಮ್ಯ ತಲುಪಿಕೊಳ್ಳಲು ಇವು ಸಂಘರ್ಷ ಸೃಷ್ಟಿಗೆ ಇಂಥ ಯುವ ಸಮೂಹವನ್ನೇ ಬಳಸಿಕೊಳ್ಳುತ್ತವೆ. ಆಗ ಹಿಂಸೆಯೇ ವ್ಯಾಪಕವಾಗುತ್ತದೆ. ಅಹಿಂಸೆಯ ತಾರ್ಕಿಕವಾದವನ್ನೇ ಅಲ್ಲಗಳೆಯುವಂಥ ವಾತಾವರಣವನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಗುತ್ತದೆ.

ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳು

ನಾವು ಎಷ್ಟೇ ಕೃತಿಗಳನ್ನು ಓದಿಕೊಂಡರೂ, ತಜ್ಞರ ಬರಹಗಳನ್ನು ಗೊತ್ತುಮಾಡಿಕೊಂಡರೂ ಗಾಂಧೀಜಿಯವರ ಅಹಿಂಸೆಯ ತಾತ್ವಿಕ ದಾರ್ಶನಿಕ ನದಿಯ ಜೀವಜಲದ ಬೊಗಸೆಯಷ್ಟು ಹನಿಗಳನ್ನಷ್ಟೇ ದಕ್ಕಿಸಿಕೊಂಡಿರುತ್ತೇವೆ. ಅದರ ಜೀವಂತಿಕೆಯ ಸಮಗ್ರ ಅಮೃತಧಾರೆಯನ್ನು ನಮ್ಮೊಳಗಿಳಿಸಿಕೊಳ್ಳುವ ನಿರಂತರ ಪ್ರಯತ್ನಗಳ ಮೂಲಕವೇ ಆ ತಾತ್ವಿಕತೆಯ ಹೊಳೆಯು ಮನುಷ್ಯಸಮೂಹದೊಳಗೆ ನೆಲೆಗೊಳ್ಳುತ್ತಾ ತನ್ನ ನಡಿಗೆಯನ್ನು ಮೂಡಿಸುತ್ತಾ ಸಾಗುತ್ತದೆ. ಅದು ಸಾಗಿದಲ್ಲೆಲ್ಲಾ ಮನುಷ್ಯತ್ವ ಮತ್ತು ಜೀವಪರ ನಿಲುವುಗಳ ಫಲವತ್ತತೆಯು ವ್ಯಾಪಕವಾಗುತ್ತಿರುತ್ತದೆ. ಆದರೆ, ಇಂಥ ತಾತ್ವಿಕ ನದಿಯ ಹರಿವನ್ನು ಅರ್ಧಕ್ಕೆ ತಡೆಗಟ್ಟಿ ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳನ್ನು ಕಟ್ಟಲಾಗುತ್ತಿದೆ. ಈ ಅಣೆಕಟ್ಟುಗಳೇ ಸುಖ, ಶಾಂತಿ, ನೆಮ್ಮದಿಯೊಂದಿಗಿನ ಅಭ್ಯುದಯದ ಬೆಳೆ ಬೆಳೆಯುವುದಕ್ಕೆ ಸಹಕಾರಿಯಾಗುತ್ತವೆ ಎಂಬ ತಪ್ಪುಕಲ್ಪನೆಯನ್ನೇ ಬಿತ್ತಿ ನಂಬಿಸಲಾಗುತ್ತಿದೆ. ಇಂಥ ಸಂಕೀರ್ಣತೆಯ ಮಧ್ಯೆ ಅಹಿಂಸೆಯ ಜೀವನದಿ ಬತ್ತದಂತೆ, ಅದು ಕಾಲದಿಂದ ಕಾಲಕ್ಕೆ ಅತ್ಯಂತ ಎಚ್ಚರದೊಂದಿಗೆ ದಾಟಿಕೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸುವ ಹೊಸದೊಂದು ಪರ್ಯಾಯ ರಾಜಕಾರಣದ ಮಾದರಿ ರೂಪುಗೊಳ್ಳಬೇಕಾಗಿದೆ. ಅದಕ್ಕಿಂತ ಮುಂಚೆ ಅಹಿಂಸೆಯ ತಾತ್ವಿಕ ನದಿಯ ಹರಿವು ನಿಲ್ಲಿಸುತ್ತಿರುವ ಶಕ್ತಿಗಳನ್ನು ಸ್ಪಷ್ಟವಾಗಿ ಅರ್ಥೈಸಿಕೊಳ್ಳಬೇಕಾಗಿದೆ. ಆ ಶಕ್ತಿಗಳು ಈ ನದಿಯನ್ನು ಬತ್ತಿಸುವ ಪ್ರಯತ್ನದಲ್ಲಿ ತೊಡಗಿವೆ. ಅದರ ಚಲನೆಯ ಹರಿವಿನೊಳಗೆ ರಕ್ತಪಾತ ನಡೆಸಿ ಭಯ ಹುಟ್ಟಿಸಿ ತಾವು ಪ್ರಬಲರಾಗುವ ಸ್ವಹಿತಾಸಕ್ತಿಗಳನ್ನು ಕಾಯ್ದುಕೊಳ್ಳುತ್ತಿವೆ. ಜನರನ್ನು ಮರಳು ಮಾಡುವ ಮರಳುಗಾರಿಕೆಯನ್ನು ಇದೇ ಆವರಣದಲ್ಲಿಯೇ ಅತ್ಯಂತ ಚಾಣಾಕ್ಷತನದಿಂದ ನಿರ್ವಹಿಸುತ್ತಿವೆ. ಇದಕ್ಕೆ ಪರ್ಯಾಯವಾಗಿ ಅಪ್ಪಟ ಸಾತ್ವಿಕತೆಯೊಂದಿಗಿನ ರಾಜಕಾರಣ ರೂಪುಗೊಳ್ಳಬೇಕು. ಅಹಿಂಸೆಯು ಸಾರ್ವಕಾಲಿಕ ಸತ್ಯ. ಹಾಗಾಗಿಯೇ ಎಲ್ಲ ಕಾಲದ ಕೊಳಕುಗಳೊಂದಿಗೆ ಎದುರುಗೊಳ್ಳುತ್ತಲೇ ಅದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುತ್ತದೆ. ಅದು ಎಂದಿಗೂ ಬತ್ತದ ನದಿಯ ನಿನಾದದ ಹಾಗೆ. ಪ್ರಾಕೃತಿಕ ವಿಕೋಪಗಳಾದಾಗ ಅದರ ನಡಿಗೆಗೆ ಅಡ್ಡಿ-ಆತಂಕಗಳು ಎದುರಾಗುವ ಹಾಗೆ ಇದೀಗ ಪ್ರಬಲ ಶಕ್ತಿಗಳ ಉದ್ದೇಶಪೂರ್ವಕ ನಕಾರಾತ್ಮಕತೆಯ ಕಾರಣಕ್ಕಾಗಿ ಹಿಂಸೆಯೇ ಸರಿಯಾದದ್ದು ಎಂಬ ಸಂಕುಚಿತ ಅಭಿಪ್ರಾಯ ಮುನ್ನೆಲೆಗೆ ಬಂದಿದೆ. ಇದನ್ನು ಅಲ್ಲಗಳೆದು ಅಹಿಂಸೆಯೇ ನಿರ್ಣಾಯಕ, ಅದರ ಆಧಾರದಲ್ಲಿಯೇ ನವಭಾರತದ ನಿರ್ಮಾಣ ಎಂಬ ದೃಢಸಂಕಲ್ಪದೊಂದಿಗಿನ ಸನ್ಮತಿಯ ರಾಜಕಾರಣ ಶುರುವಾಗಬೇಕಿದೆ. ಅಹಿಂಸೆಯ ನಿನಾದದ ಮಾಧುರ್ಯದ ಮಾದರಿ ಜಗತ್ತನ್ನು ಸ್ವಚ್ಛಗೊಳಿಸಬೇಕಿದೆ.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.

ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.

ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.

ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.

ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಎಪ್ರಿಲ್‌ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೆರವಣಿಗೆ ಮಾರ್ಗ

ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ13 hours ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

ಅಂಕಣ17 hours ago

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು...

ದಿನದ ಸುದ್ದಿ2 days ago

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ...

ದಿನದ ಸುದ್ದಿ2 days ago

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ...

ದಿನದ ಸುದ್ದಿ2 days ago

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ,...

ದಿನದ ಸುದ್ದಿ4 days ago

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು...

ದಿನದ ಸುದ್ದಿ5 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ5 days ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

ದಿನದ ಸುದ್ದಿ6 days ago

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ...

ದಿನದ ಸುದ್ದಿ7 days ago

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌...

Trending