Connect with us

ರಾಜಕೀಯ

ಅಹಿಂಸೆ : ಎಂದಿಗೂ ಬತ್ತದ ನದಿಯ ನಿನಾದ

Published

on

ಸಂಘರ್ಷವನ್ನು ಸ್ಥಾಯಿಯಾಗಿಸಿ ಪ್ರಯೋಜನ ಪಡೆದುಕೊಳ್ಳುವ ಪ್ರಯತ್ನಗಳು ನಿರಂತರವಾಗಿ ಯಶಸ್ಸು ಕಾಣುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅಹಿಂಸೆಯ ಮೌಲ್ಯದ ಆಧಾರದಲ್ಲಿ ಪರ್ಯಾಯ ರಾಜಕಾರಣ ರಾಷ್ಟ್ರದಾದ್ಯಂತ ರೂಪುಗೊಳ್ಳಬೇಕಾದ ಅನಿವಾರ್ಯತೆಯನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ಕಾಡಿಸಿಕೊಳ್ಳಬೇಕಿದೆ. ದೇಶವೊಂದು ಇನ್ನೊಂದು ರಾಷ್ಟ್ರದ ಕುರಿತು ಸಿಟ್ಟಿಗೇಳುವಿಕೆ ಜಾಗತಿಕ ಮಟ್ಟದ ಸಂಘರ್ಷವನ್ನು ಸಂಕೇತಿಸಿದರೆ, ಜನರ ನಡುವೆಯೇ ನಡೆಯುವ ಜಗಳಗಳು ಆಂತರಿಕ ವ್ಯಗ್ರತೆಗೆ ಸಾಕ್ಷಿಯಾಗುತ್ತವೆ. ವಿವಿಧ ಸ್ತರಗಳಲ್ಲಿ ವ್ಯಗ್ರತೆಯು ವ್ಯಕ್ತಿಯೊಳಗೆ ಮೇಳೈಸಿಕೊಳ್ಳುತ್ತದೆ. ಅದು ವಿವಿಧ ವರ್ತನೆಗಳಲ್ಲಿ ವ್ಯಕ್ತವಾಗುತ್ತದೆ. ಆ ವರ್ತನೆಗಳು ಉಂಟುಮಾಡುವ ಪರಿಣಾಮಗಳು ವ್ಯಕ್ತಿಗತ ಹಾಗೂ ಸಾಮೂಹಿಕ ಸಂಘರ್ಷಗಳ ರೂಪದಲ್ಲಿ ಕಂಡುಬರುತ್ತವೆ. ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಅಧಿಕಾರ ಕೇಂದ್ರಗಳು ಈ ರೂಪಗಳನ್ನು ತಮ್ಮ ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಅತ್ಯಂತ ಚಾಣಾಕ್ಷಯುತವಾಗಿ ಬಳಸಿಕೊಳ್ಳುತ್ತವೆ. ದೇಶ, ಧರ್ಮ ಮತ್ತು ಜಾತಿಯ ಅಸ್ಮಿತೆಯ ಪ್ರಶ್ನೆಗಳನ್ನು ಮುನ್ನೆಲೆಗೆ ತಂದು ತಮ್ಮ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ರಾಜಕಾರಣ ಅತ್ಯಂತ ಯಶಸ್ವಿಯಾಗಿ ನಿಭಾಯಿಸಲ್ಪಡುತ್ತದೆ.

ಪ್ರಜಾಪ್ರಭುತ್ವವಾದಿ ಆಡಳಿತ ವಿನ್ಯಾಸಗೊಳಿಸಗೊಳಿಸಿಕೊಂಡಿರುವ ಅಭಿವೃದ್ಧಿ ಮತ್ತು ಅದಕ್ಕೆ ಸಂಬಂಧಿಸಿದ ಪರಿಕಲ್ಪನೆಗಳು ಅಂಥ ರಾಜಕಾರಣಕ್ಕೆ ಪೂರಕವಾಗಿರುವಂತೆಯೇ ಪಾತ್ರವನ್ನು ನಿರ್ವಹಿಸುತ್ತಿವೆ. ಟೊಳ್ಳುತನದ ಸಂಗತಿಗಳೊಂದಿಗೆ ಅಭಿವೃದ್ದಿಯನ್ನು ವ್ಯಾಖ್ಯಾನಿಸುವ ಪ್ರವೃತ್ತಿಯನ್ನು ಸಾರ್ವತ್ರಿಕಗೊಳಿಸುವ ಈ ಅಭಿವೃದ್ಧಿಯು ಅದಕ್ಕೆ ಸಹಕಾರಿಯಾಗಿರುತ್ತದೆ. ಪ್ರಶ್ನಿಸುವ ಬದಲಾಗಿ ಆ ಸಂಕುಚಿತ ರಾಜಕಾರಣವು ಅಧಿಕಾರ ಮತ್ತು ಪ್ರಭಾವವನ್ನು ಸ್ಥಿರವಾಗಿರಿಸಿಕೊಂಡು ಬಹುದೊಡ್ಡ ಸಾಮಾಜಿಕ ಪಲ್ಲಟದ ಸಾಧ್ಯತೆಗಳನ್ನು ಒಡೆಯುವುದರ ಕಡೆಗೆ ನಡೆದುಬಿಡುತ್ತದೆ. ಅಡ್ಡ ಎದುರಾಗುವವರನ್ನು ತಮ್ಮ ಪ್ರಭಾವೀ ಪ್ರಾಬಲ್ಯದ ಬಲದೊಂದಿಗೆ ಹತ್ತಿಕ್ಕಿಬಿಡುತ್ತದೆ. ಅಧಿಕಾರ ಕೇಂದ್ರಗಳ ಮೂಲಕ ದಾಟಿಕೊಂಡ ಶಿಕ್ಷಣವು ವ್ಯಕ್ತಿಗತ ಪ್ರಯೋಜನವಾದಿ ಯೋಚನೆಗಳನ್ನೇ ಬಿತ್ತುವುದರ ಕಡೆಗೆ ಆಸಕ್ತಿ ವಹಿಸುವುದರಿಂದ ಶಿಕ್ಷಿತ-ಸುಶಿಕ್ಷಿತ ವಲಯವೂ ಅನಕ್ಷರಸ್ತ ಸಮುದಾಯಗಳಲ್ಲಿರುವ ಮೌಢ್ಯವನ್ನೇ ಅಂತರ್ಗತ ಗುಣಲಕ್ಷಣವಾಗಿಸಿಕೊಳ್ಳುತ್ತದೆ. ಅದನ್ನು ಜನರೊಳಗೂ ವ್ಯಾಪಕವಾಗಿಸಲು ಪ್ರಯತ್ನಿಸುತ್ತದೆ. ಹೀಗಾದಾಗ ಹೊಸ ಪೀಳಿಗೆಯು ಅದರ ರಹಸ್ಯ ಕಾರ್ಯಸೂಚಿಯ ಭಾಗವಾಗಿರುವ ಅಪಮೌಲ್ಯೀಕೃತ ಅಂಶಗಳು ರೂಪಿಸುವ ಚೌಕಟ್ಟುಗಳಲ್ಲಿ ಬಂಧಿಯಾಗಿ ಯೋಚಿಸಲಾರಂಭಿಸುತ್ತದೆ.

ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳು

ಈ ಹಂತದಲ್ಲಿಯೇ ಸಂಘರ್ಷದ ಪರ ನಿಲ್ಲುವ ದೃಷ್ಟಿಕೋನಗಳನ್ನೇ ಮುಖ್ಯವಾಗಿಸಿಕೊಳ್ಳುತ್ತದೆ. ಅಹಿಂಸೆಯ ಮೌಲ್ಯದ ಸಕಾರಾತ್ಮಕತೆಯು ಹಿಂಸೆಯ ಪರವಾದ ವಿತಂಡವಾದಿ ಆಲೋಚನೆಗಳ ಭರಾಟೆಯಲ್ಲಿ ಹಿನ್ನೆಲೆಗೆ ಸರಿಯುತ್ತದೆ. ಇಂಥ ಸಂದರ್ಭದಲ್ಲಿ ಅಹಿಂಸಾತ್ಮಕ ಮನೋಧರ್ಮವನ್ನು ಮುನ್ನೆಲೆಗೆ ತಂದು ಅಧಿಕೃತಗೊಳಿಸುವ ಅಪ್ಪಟ ಪ್ರಯೋಗಶೀಲ ರಾಜಕಾರಣ ಮೊಳಕೆಯೊಡೆಯಬೇಕು. ಹಾಗಾಗುತ್ತಿಲ್ಲ. ಹಾಗಾಗುವುದಕ್ಕೆ ಸಾಮಾಜಿಕ, ರಾಜಕೀಯ, ಧಾರ್ಮಿಕ ಕೇಂದ್ರಗಳ ಮುಂಚೂಣಿ ಮುಖಂಡತ್ವ ಬಿಡುತ್ತಿಲ್ಲ. ತಾವು ಸಮಸ್ಯೆ ಎಂದು ಪರಿಭಾವಿಸಿಕೊಂಡಿರುವ ಜಟಿಲತೆಗೆ ಪ್ರಾಮಾಣಿಕವಾಗಿ ಪರಿಹಾರ ಹುಡುಕಿಕೊಳ್ಳುವ ಪ್ರಯತ್ನಗಳನ್ನೂ ನಡೆಸುತ್ತಿಲ್ಲ. ಅಂಥ ಪ್ರಾಮಾಣಿಕ ಹೆಜ್ಜೆಗಳು ಅಹಿಂಸೆಯ ಪರವಾದ ಅಲೆಯನ್ನು ಸೃಷ್ಟಿಸುವ ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳನ್ನು ಹೊಳೆಸುತ್ತವೆ. ಇದರ ಬದಲಾಗಿ ಮತ್ತೆ ಜಾತಿನಿಷ್ಠ ಮಿತಿಗಳನ್ನು ವಿಸ್ತರಿಸುವ, ಧರ್ಮದೊಳಗೆ ಇಲ್ಲದೇ ಇರುವ ಸಂಗತಿಗಳನ್ನು ಇತಿಹಾಸದೊಂದಿಗೆ ತಳುಕುಹಾಕುವ ಮತ್ತು ಅಂಥ ಸಂಕುಚಿತ ಪಠ್ಯಗಳ ಆಧಾರದಲ್ಲಿಯೇ ಅಧಿಕಾರ ರಾಜಕಾರಣವನ್ನು ಬದುಕಿಸಿಬಿಡುವ ಹುನ್ನಾರಗಳನ್ನು ಹೊಳೆಸಿಕೊಳ್ಳುವುದರ ಕಡೆಗೇ ಅತ್ಯುತ್ಸಾಹ ವ್ಯಕ್ತವಾಗುತ್ತಿದೆ. ಒಳ್ಳೆಯದನ್ನು ಹೇಳಿದರೆ ಸುಲಭಕ್ಕೆ ಒಪ್ಪಿಕೊಳ್ಳದ ಹಠಮಾರಿತನ ಅದರದ್ದು. ಗಾಂಧಿ ಜೀವಂತಗೊಳಿಸಿದ ಅಹಿಂಸೆಯ ಮಾದರಿಯ ಬಗ್ಗೆ ಪ್ರಸ್ತಾಪಿಸಿದರೆ ಅದು ದಿಢೀರನೆ ಅವಿವೇಕತನದ ಅತಿರೇಕವನ್ನು ಪ್ರದರ್ಶಿಸಿಬಿಡುತ್ತದೆ. ‘ಗಾಂಧಿ ಏನಿದ್ದರೂ ಆ ಕಾಲಕ್ಕೆ, ಈಗಲ್ಲ’ ಎಂದು ಉಡಾಫೆಯ ಮನೋಭಾವವನ್ನು ತೂರಿಬಿಡುತ್ತದೆ.
ಗಾಂಧಿಯ ವ್ಯಕ್ತಿತ್ವದೊಂದಿಗೇ ಬೆರೆತುಹೋಗಿದ್ದ ಅಹಿಂಸೆಯ ಮೌಲ್ಯವು ವರ್ತಮಾನದಲ್ಲಷ್ಟೇ ಅಲ್ಲ, ಭವಿಷ್ಯದ ಜಗತ್ತಿನ ಎಲ್ಲ ಬಗೆಯ ಸಂಘರ್ಷಗಳನ್ನು ಕೊನೆಗಾಣಿಸುವ ಪ್ರಾಕೃತಿಕ ದಿವ್ಯೌಷಧ ಎಂಬುದನ್ನು ಮನಗಾಣಲೇಬೇಕು. ಗಾಂಧಿಯನ್ನು ಅರ್ಥೈಸಿಕೊಳ್ಳದ ಮನಸ್ಸುಗಳು ಈ ಕ್ಷಣಕ್ಕೆ ತಮ್ಮ ಮೂಗಿನ ನೇರಕ್ಕೆ ತೀರ್ಮಾನವನ್ನು ಕೈಗೊಂಡುಬಿಡುತ್ತವೆ. ಸಂಪೂರ್ಣ ತಿಳುವಳಿಕೆ ಇಲ್ಲದೇ ರೂಪುಗೊಳ್ಳುವ ಅಂಥ ವ್ಯಕ್ತಿಗತ ನಿಲುವುಗಳು ಸಮೂಹಕ್ಕೂ ದಾಟಿಕೊಳ್ಳುತ್ತವೆ. ಗಾಂಧಿ ಮತ್ತು ಅವರು ಪ್ರತಿಪಾದಿಸಿದ ಅಹಿಂಸಾವಾದ ಅಪ್ರಸ್ತುತ ಎಂದು ಹೇಳುವ ಕಾಲಕ್ಕೆ ಅಹಿಂಸೆಯ ತಾತ್ವಿಕತೆಯೊಂದಿಗಿನ ಗಾಂಧಿ ವ್ಯಕ್ತಿತ್ವವನ್ನು ಸಮಗ್ರವಾಗಿ ತಿಳಿದುಕೊಳ್ಳುವ ಪ್ರಯತ್ನಗಳನ್ನೇ ನಡೆಸುವುದಿಲ್ಲ. ಆ ತಾತ್ವಿಕ ಆದರ್ಶವನ್ನು ವರ್ತಮಾನದ ಸ್ಥಿತಿಗತಿಗಳಿಗೆ ತಕ್ಕಂತೆ ಅನ್ವಯಿಸಿಕೊಳ್ಳುವ ನಮ್ಯತೆಯ ಹೆಜ್ಜೆಗಳನ್ನೇ ಅನುಸರಿಸದೇ ಸಾರಾಸಗಟಾಗಿ ತಿರಸ್ಕಾರದ ಭಾವನೆಗಳು ನೆಲೆಗೊಂಡರೆ ಪ್ರಯೋಜನವಿಲ್ಲ.

ಅಹಿಂಸೆ : ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆ..?

ಈಗಿನ ರಾಜಕೀಯ ಹೇಳಿಕೆಗಳು ಇಂಥ ತಿರಸ್ಕಾರದ ಭಾವನೆಗಳ ಆಧಾರದಲ್ಲಿಯೇ ರೂಪುಗೊಳ್ಳುತ್ತಿವೆ. ಅವುಗಳು ಜನರ ಅಭಿಪ್ರಾಯಗಳನ್ನೂ ನಿಯಂತ್ರಿಸುತ್ತಿವೆ. ಗಾಂಧಿ ಮತ್ತು ಅಹಿಂಸಾ ತಾತ್ವಿಕತೆಯ ಬಗ್ಗೆ ಹೊಸ ಪೀಳಿಗೆಯು ಅರ್ಧಂಬರ್ಧ ತಿಳಿದುಕೊಂಡ ಸಂದರ್ಭದಲ್ಲಿ ಪ್ರಬಲ ಕೇಂದ್ರಗಳು ಹಿಂಸೆಯೊಂದಿಗಿನ ಕಾರ್ಯತಂತ್ರಗಳನ್ನು ಪ್ರಯೋಗಿಸಿ ಯಶಸ್ಸು ಕಂಡುಕೊಳ್ಳುತ್ತವೆ. ಈ ಕಾರ್ಯತಂತ್ರಗಳನ್ನು ಅಧಿಕಾರ ಕೇಂದ್ರಗಳು ಸಂಘಟನೆಗಳ ನೆರವಿನೊಂದಿಗೆ ಪ್ರಯೋಗಿಸುತ್ತವೆ. ಈಗಾಗಲೇ ಆಗಿಹೋದ ಇತಿಹಾಸ, ಗಾಂಧಿಯೂ ಸೇರಿದಂತೆ ವಿವಿಧ ದಾರ್ಶನಿಕರ ಕುರಿತಾದ ಸಮಗ್ರ ವಿವರಗಳು ಮತ್ತು ತಾತ್ವಿಕತೆಯ ಶಕ್ತಿಯ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡಿರದ ಜನಸಮೂಹದ ಅಜ್ಞಾನವನ್ನು ತಮ್ಮ ರಹಸ್ಯ ಕಾರ್ಯಸೂಚಿಗಳ ಯಶಸ್ವಿಗೆ ಪೂರಕವಾಗಿ ಬಳಸಿಕೊಳ್ಳುತ್ತವೆ. ಇಂದು ಬಹುತೇಕ ಯುವಕರು ಹಿಂಸೆ ಮತ್ತು ಅಹಿಂಸೆಯನ್ನು ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆಯಲ್ಲಿ ಚರ್ಚೆಗೊಳಪಡಿಸುತ್ತಿದ್ದಾರೆ. ಇದರರ್ಥ ಐವತ್ತು ಪರ್ಸೆಂಟ್ ಹಿಂಸೆ, ಐವತ್ತು ಪರ್ಸೆಂಟ್ ಅಹಿಂಸೆ ಇರಬೇಕು, ಅಂದಾಗಲೇ ಬ್ಯಾಲೆನ್ಸ್ ಆಗುತ್ತದೆ ಎಂಬ ಸಂಕುಚಿತತೆಯ ವಾದಗಳನ್ನು ಮುಂದಿಡುತ್ತಿದ್ದಾರೆ. ಹಿಂಸಿಸುವ ಪ್ರಾಬಲ್ಯ ನಮ್ಮ ಜೊತೆಗಿದ್ದರೆ ಉಳಿದವರು ಭಯಪಡುತ್ತಾರೆ ಎಂದು ಹಿರಿಯರ ಮುಂದೆ ಅಪ್ರಬುದ್ಧ ಮಾತುಗಳನ್ನಾಡುತ್ತಿದ್ದಾರೆ. ಅವರೊಂದಿಗೆ ಚರ್ಚಿಸುವ ಉತ್ಸಾಹದಲ್ಲಿ ಗಾಂಧಿ ವ್ಯಕ್ತಿತ್ವ, ಅವರು ಪ್ರತಿಪಾದಿಸಿದ ಅಹಿಂಸಾ ಮೌಲ್ಯ, ಭಾರತದ ಸ್ವಾತಂತ್ರ್ಯದ ಹೋರಾಟದಲ್ಲಿ ಅದು ನಿರ್ವಹಿಸಿದ ಮೌಲಿಕ ಪಾತ್ರ, ವರ್ತಮಾನದಲ್ಲಿ ಅದು ಅನ್ವಯಗೊಳ್ಳಬೇಕಾದ ಅವಶ್ಯಕತೆಗಳ ಬಗ್ಗೆ ಮಾತನಾಡಿದರೆ ಆ ಅಂಶಗಳನ್ನು ಆ ಕ್ಷಣಕ್ಕೆ ಸಂಕುಚಿತವಾಗಿ ಅರ್ಥೈಸಿಕೊಂಡು ಅಪ್ರಸ್ತುತವೆನ್ನಿಸುವ, ಅವಿವೇಕತನದ ವಾದವನ್ನು ಮುಂದಿಡುತ್ತಿದ್ದಾರೆ. ಮುಖ್ಯವಾಹಿನಿಯ ಮಾಧ್ಯಮಗಳ ಒಳಗೂ ಇಂಥ ವಾದಗಳನ್ನು ನೆಚ್ಚಿಕೊಂಡವರು ಇರುವುದರಿಂದ ಗಾಂಧಿ ಕುರಿತಾದ ಸಮಗ್ರ ಅರ್ಥೈಸಿಕೊಳ್ಳುವಿಕೆಯ ಜವಾಬ್ದಾರಿಯುತ ನಡೆಗಳು ಹಿನ್ನಡೆ ಅನುಭವಿಸುವಂಥ ಸ್ಥಿತಿ ನಿರ್ಮಾಣವಾಗಿದೆ.

ಅಹಿಂಸೆಯ ಸಾರ್ವಕಾಲಿಕತೆಯ ನಿದರ್ಶನಗಳು

ಇತಿಹಾಸದ ಪುಟಗಳಲ್ಲಿ ಅಹಿಂಸೆಯ ಸಾರ್ವಕಾಲಿಕತೆಯ ಶ್ರೇಷ್ಠ ನಿದರ್ಶನಗಳು ದಾಖಲಾಗಿವೆ. ಅವುಗಳು ವರ್ತಮಾನದ ಪೀಳಿಗೆಯ ಪ್ರಜ್ಞೆಯ ಅಂತಸತ್ವವನ್ನು ಮತ್ತಷ್ಟು ಪ್ರಖರಗೊಳಿಸುವ ರೀತಿಯಲ್ಲಿ ಮೇಳೈಸಿಕೊಳ್ಳಬೇಕು. ಆದರೆ, ಮೌಲಿಕ ಆದರ್ಶ ಹೆಜ್ಜೆಗಳು ಮತ್ತು ಅವುಗಳೊಂದಿಗಿನ ಇತಿಹಾಸದ ಅರಿವು ತಂದುಕೊಳ್ಳುವ ಯಾವುದೇ ಪ್ರಯತ್ನಗಳಲ್ಲಿ ತೊಡಗಿಕೊಳ್ಳದೇ ಅಗ್ರೆಸ್ಸಿವ್ ನಡವಳಿಕೆಗಳನ್ನೇ ಬಂಡವಾಳವಾಗಿಸಿಕೊಳ್ಳುತ್ತಿರುವ ಯುವ ಸಮೂಹವು ಪ್ರಬಲ ಶಕ್ತಿಗಳು ಸಾಕಿಕೊಳ್ಳುವ ರಾಜಕೀಯ ಪಕ್ಷಗಳ
ಕಾರ್ಯಕರ್ತರಾಗುವುದಕ್ಕಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಂಡಿದೆ. ಹಿಂದಿನದ್ದನ್ನು ಅರಿತುಕೊಳ್ಳುವ ಸಂಯಮ, ಯಾರು ಯಾರನ್ನು ದಾರಿ ತಪ್ಪಿಸಿ ತಮ್ಮ ಶಕ್ತಿ ಸಂಪನ್ಮೂಲವನ್ನು ಯಾವ ಬಗೆಯ ಸಂಘರ್ಷಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂಬುದರ ಕುರಿತಾದ ಸ್ಪಷ್ಟ ತಿಳುವಳಿಕೆ, ಆ ಮೂಲಕ ಅಹಿಂಸೆಯೊಂದಿಗಿನ ಗಾಂಧಿವಾದವನ್ನು ಮುನ್ನೆಲೆಗೆ ತರುವಂಥ ಆದರ್ಶಯುತ ಹೆಜ್ಜೆಗಳೊಂದಿಗೆ ಗುರುತಿಸಿಕೊಳ್ಳಬಹುದಾದ ಅವಕಾಶವನ್ನೇ ಬಿಟ್ಟುಕೊಟ್ಟಿದೆ. ಈ ಕಾರಣಕ್ಕಾಗಿಯೇ ಯಾವುದು ಸರಿ, ಯಾವುದು ತಪ್ಪು ಎಂಬ ವಿವೇಚನೆಯ ಬದಲು ಅಧಿಕಾರ ಸಂರಚನೆಯ ಕೇಂದ್ರಗಳನ್ನು ಬಲಪಡಿಸಿ ತಮ್ಮ ತಾತ್ಪೂರ್ತಿಕ ಆಸೆಗಳನ್ನು ಅವರು ಈಡೇರಿಸಿಕೊಳ್ಳುತ್ತಿದ್ದಾರೆ. ಬೈಕ್ ಕೊಳ್ಳಬೇಕು, ಕಾರ್ ಜೊತೆಗಿರಿಸಿಕೊಂಡು ಪ್ರತಿಷ್ಠೆ ಮೆರೆಯಬೇಕು, ಸುಸಜ್ಜಿತ ಮನೆ ಹೊಂದಬೇಕು, ಐಷಾರಾಮಿ ಬದುಕು ತಮ್ಮದಾಗಿಸಿಕೊಳ್ಳಬೇಕು – ಇಂಥವೇ ತಾತ್ಪೂರ್ತಿಕ ಆಸೆಗಳನ್ನು ಈಡೇರಿಸಿಕೊಳ್ಳುವುದಕ್ಕೆ ಕಾರ್ಯಕರ್ತರಿಗೆ ಹಂತಹಂತವಾಗಿ ರಾಜಕೀಯ ಪಕ್ಷಗಳು ನೆರವಾಗುತ್ತವೆ. ಅಧಿಕಾರದ ಗಮ್ಯ ತಲುಪಿಕೊಳ್ಳಲು ಇವು ಸಂಘರ್ಷ ಸೃಷ್ಟಿಗೆ ಇಂಥ ಯುವ ಸಮೂಹವನ್ನೇ ಬಳಸಿಕೊಳ್ಳುತ್ತವೆ. ಆಗ ಹಿಂಸೆಯೇ ವ್ಯಾಪಕವಾಗುತ್ತದೆ. ಅಹಿಂಸೆಯ ತಾರ್ಕಿಕವಾದವನ್ನೇ ಅಲ್ಲಗಳೆಯುವಂಥ ವಾತಾವರಣವನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಗುತ್ತದೆ.

ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳು

ನಾವು ಎಷ್ಟೇ ಕೃತಿಗಳನ್ನು ಓದಿಕೊಂಡರೂ, ತಜ್ಞರ ಬರಹಗಳನ್ನು ಗೊತ್ತುಮಾಡಿಕೊಂಡರೂ ಗಾಂಧೀಜಿಯವರ ಅಹಿಂಸೆಯ ತಾತ್ವಿಕ ದಾರ್ಶನಿಕ ನದಿಯ ಜೀವಜಲದ ಬೊಗಸೆಯಷ್ಟು ಹನಿಗಳನ್ನಷ್ಟೇ ದಕ್ಕಿಸಿಕೊಂಡಿರುತ್ತೇವೆ. ಅದರ ಜೀವಂತಿಕೆಯ ಸಮಗ್ರ ಅಮೃತಧಾರೆಯನ್ನು ನಮ್ಮೊಳಗಿಳಿಸಿಕೊಳ್ಳುವ ನಿರಂತರ ಪ್ರಯತ್ನಗಳ ಮೂಲಕವೇ ಆ ತಾತ್ವಿಕತೆಯ ಹೊಳೆಯು ಮನುಷ್ಯಸಮೂಹದೊಳಗೆ ನೆಲೆಗೊಳ್ಳುತ್ತಾ ತನ್ನ ನಡಿಗೆಯನ್ನು ಮೂಡಿಸುತ್ತಾ ಸಾಗುತ್ತದೆ. ಅದು ಸಾಗಿದಲ್ಲೆಲ್ಲಾ ಮನುಷ್ಯತ್ವ ಮತ್ತು ಜೀವಪರ ನಿಲುವುಗಳ ಫಲವತ್ತತೆಯು ವ್ಯಾಪಕವಾಗುತ್ತಿರುತ್ತದೆ. ಆದರೆ, ಇಂಥ ತಾತ್ವಿಕ ನದಿಯ ಹರಿವನ್ನು ಅರ್ಧಕ್ಕೆ ತಡೆಗಟ್ಟಿ ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳನ್ನು ಕಟ್ಟಲಾಗುತ್ತಿದೆ. ಈ ಅಣೆಕಟ್ಟುಗಳೇ ಸುಖ, ಶಾಂತಿ, ನೆಮ್ಮದಿಯೊಂದಿಗಿನ ಅಭ್ಯುದಯದ ಬೆಳೆ ಬೆಳೆಯುವುದಕ್ಕೆ ಸಹಕಾರಿಯಾಗುತ್ತವೆ ಎಂಬ ತಪ್ಪುಕಲ್ಪನೆಯನ್ನೇ ಬಿತ್ತಿ ನಂಬಿಸಲಾಗುತ್ತಿದೆ. ಇಂಥ ಸಂಕೀರ್ಣತೆಯ ಮಧ್ಯೆ ಅಹಿಂಸೆಯ ಜೀವನದಿ ಬತ್ತದಂತೆ, ಅದು ಕಾಲದಿಂದ ಕಾಲಕ್ಕೆ ಅತ್ಯಂತ ಎಚ್ಚರದೊಂದಿಗೆ ದಾಟಿಕೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸುವ ಹೊಸದೊಂದು ಪರ್ಯಾಯ ರಾಜಕಾರಣದ ಮಾದರಿ ರೂಪುಗೊಳ್ಳಬೇಕಾಗಿದೆ. ಅದಕ್ಕಿಂತ ಮುಂಚೆ ಅಹಿಂಸೆಯ ತಾತ್ವಿಕ ನದಿಯ ಹರಿವು ನಿಲ್ಲಿಸುತ್ತಿರುವ ಶಕ್ತಿಗಳನ್ನು ಸ್ಪಷ್ಟವಾಗಿ ಅರ್ಥೈಸಿಕೊಳ್ಳಬೇಕಾಗಿದೆ. ಆ ಶಕ್ತಿಗಳು ಈ ನದಿಯನ್ನು ಬತ್ತಿಸುವ ಪ್ರಯತ್ನದಲ್ಲಿ ತೊಡಗಿವೆ. ಅದರ ಚಲನೆಯ ಹರಿವಿನೊಳಗೆ ರಕ್ತಪಾತ ನಡೆಸಿ ಭಯ ಹುಟ್ಟಿಸಿ ತಾವು ಪ್ರಬಲರಾಗುವ ಸ್ವಹಿತಾಸಕ್ತಿಗಳನ್ನು ಕಾಯ್ದುಕೊಳ್ಳುತ್ತಿವೆ. ಜನರನ್ನು ಮರಳು ಮಾಡುವ ಮರಳುಗಾರಿಕೆಯನ್ನು ಇದೇ ಆವರಣದಲ್ಲಿಯೇ ಅತ್ಯಂತ ಚಾಣಾಕ್ಷತನದಿಂದ ನಿರ್ವಹಿಸುತ್ತಿವೆ. ಇದಕ್ಕೆ ಪರ್ಯಾಯವಾಗಿ ಅಪ್ಪಟ ಸಾತ್ವಿಕತೆಯೊಂದಿಗಿನ ರಾಜಕಾರಣ ರೂಪುಗೊಳ್ಳಬೇಕು. ಅಹಿಂಸೆಯು ಸಾರ್ವಕಾಲಿಕ ಸತ್ಯ. ಹಾಗಾಗಿಯೇ ಎಲ್ಲ ಕಾಲದ ಕೊಳಕುಗಳೊಂದಿಗೆ ಎದುರುಗೊಳ್ಳುತ್ತಲೇ ಅದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುತ್ತದೆ. ಅದು ಎಂದಿಗೂ ಬತ್ತದ ನದಿಯ ನಿನಾದದ ಹಾಗೆ. ಪ್ರಾಕೃತಿಕ ವಿಕೋಪಗಳಾದಾಗ ಅದರ ನಡಿಗೆಗೆ ಅಡ್ಡಿ-ಆತಂಕಗಳು ಎದುರಾಗುವ ಹಾಗೆ ಇದೀಗ ಪ್ರಬಲ ಶಕ್ತಿಗಳ ಉದ್ದೇಶಪೂರ್ವಕ ನಕಾರಾತ್ಮಕತೆಯ ಕಾರಣಕ್ಕಾಗಿ ಹಿಂಸೆಯೇ ಸರಿಯಾದದ್ದು ಎಂಬ ಸಂಕುಚಿತ ಅಭಿಪ್ರಾಯ ಮುನ್ನೆಲೆಗೆ ಬಂದಿದೆ. ಇದನ್ನು ಅಲ್ಲಗಳೆದು ಅಹಿಂಸೆಯೇ ನಿರ್ಣಾಯಕ, ಅದರ ಆಧಾರದಲ್ಲಿಯೇ ನವಭಾರತದ ನಿರ್ಮಾಣ ಎಂಬ ದೃಢಸಂಕಲ್ಪದೊಂದಿಗಿನ ಸನ್ಮತಿಯ ರಾಜಕಾರಣ ಶುರುವಾಗಬೇಕಿದೆ. ಅಹಿಂಸೆಯ ನಿನಾದದ ಮಾಧುರ್ಯದ ಮಾದರಿ ಜಗತ್ತನ್ನು ಸ್ವಚ್ಛಗೊಳಿಸಬೇಕಿದೆ.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು

Published

on

ಮೇಲ್ಭದ್ರ ನೀರಿಗಾಗಿ ದಾವಣಗೆರೆ ಬಂದ್‌: ಗುಟ್ಕಾ–ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ, ನಗರದಲ್ಲಿ ಪ್ರತಿಭಟನೆ ಕಾವು

ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್‌ಗೆ ಕರೆ ನೀಡಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಗರದ ವಿವಿಧ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮೇಲ್ಭದ್ರ ಯೋಜನೆಯ ನೀರು ದಾವಣಗೆರೆ ಭಾಗದ ರೈತರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ನೀರಿನ ಲಭ್ಯತೆ ಕೃಷಿ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವ ಹಿನ್ನೆಲೆಯಲ್ಲಿ, ನೀರು ಬಿಡುಗಡೆ ವಿಚಾರದಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಬೇಡಿಕೆಗೆ ತ್ವರಿತವಾಗಿ ಸ್ಪಂದಿಸಬೇಕು ಎಂಬ ಆಗ್ರಹವೂ ಕೇಳಿಬಂತು.

http://Visit : www.suddidina.com

davangere-bandh-upper-bhadra-water-release-gutka-pan-masala-ban-protest-renukacharya

ಗುಟ್ಕಾ, ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ

ಬಂದ್‌ನ ಮತ್ತೊಂದು ಪ್ರಮುಖ ಬೇಡಿಕೆ ಗುಟ್ಕಾ ಹಾಗೂ ಪಾನ್‌ ಮಸಾಲಾ ನಿಷೇಧಕ್ಕೆ ಸಂಬಂಧಿಸಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಇಂತಹ ಉತ್ಪನ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಒತ್ತಾಯಿಸಿದೆ.

ಈ ಎರಡು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಬೆಂಬಲ ನೀಡುವಂತೆ ವ್ಯಾಪಾರಸ್ಥರು, ವಿದ್ಯಾರ್ಥಿಗಳು, ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿದ್ದು, ಬಂದ್‌ಗೆ ಬೆಂಬಲ ಪಡೆಯಲು ಸಂಘಟಕರು ಕರೆ ನೀಡಿದ್ದಾರೆ.

https://x.com/ians_india/status/2094602342230528256

ಟೈರ್‌ಗೆ ಬೆಂಕಿ; ಪೊಲೀಸರ ಮಧ್ಯಪ್ರವೇಶ

ಪ್ರತಿಭಟನೆಯ ವೇಳೆ ನಗರದ ಹಲವು ವೃತ್ತಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಲಾಯಿತು. ಇದರಿಂದ ಕೆಲಕಾಲ ರಸ್ತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.

ಸಾರ್ವಜನಿಕ ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪರಿಸ್ಥಿತಿಯನ್ನು ಗಮನಿಸಲಾಗಿದ್ದು, ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಪ್ರಯತ್ನ ನಡೆದಿದೆ.

ಬಂದ್‌ಗೆ ವ್ಯಾಪಾರಸ್ಥರ ಬೆಂಬಲ?

ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. ಆದರೆ ಬಂದ್‌ಗೆ ವಿವಿಧ ವರ್ಗಗಳಿಂದ ಎಷ್ಟರ ಮಟ್ಟಿಗೆ ಬೆಂಬಲ ದೊರೆಯಲಿದೆ ಎಂಬುದು ದಿನದ ಬೆಳವಣಿಗೆಗಳಿಂದ ಸ್ಪಷ್ಟವಾಗಲಿದೆ.

ಮೇಲ್ಭದ್ರ ನೀರಿನ ವಿಚಾರ ದಾವಣಗೆರೆ ಜಿಲ್ಲೆಯ ರೈತರ ಪಾಲಿಗೆ ದೀರ್ಘಕಾಲದ ಪ್ರಮುಖ ವಿಷಯವಾಗಿದ್ದು, ಇದೀಗ ಈ ಬೇಡಿಕೆ ಮತ್ತೊಮ್ಮೆ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದೆ. ಇದರ ಜತೆಗೆ ಗುಟ್ಕಾ ಮತ್ತು ಪಾನ್‌ ಮಸಾಲಾ ನಿಷೇಧದ ಬೇಡಿಕೆಯನ್ನೂ ಮುನ್ನೆಲೆಗೆ ತರುವ ಮೂಲಕ ಬಿಜೆಪಿ ರೈತ ಮೋರ್ಚಾ ಹೋರಾಟಕ್ಕೆ ವ್ಯಾಪಕ ಸ್ವರೂಪ ನೀಡಲು ಮುಂದಾಗಿದೆ.

ಒಟ್ಟಿನಲ್ಲಿ, ಮೇಲ್ಭದ್ರ ನೀರು ಬಿಡುಗಡೆ ಮತ್ತು ಗುಟ್ಕಾ–ಪಾನ್‌ ಮಸಾಲಾ ನಿಷೇಧ ಎಂಬ ಎರಡು ಪ್ರಮುಖ ಬೇಡಿಕೆಗಳೊಂದಿಗೆ ದಾವಣಗೆರೆಯಲ್ಲಿ ಬಂದ್‌ ಹಾಗೂ ಪ್ರತಿಭಟನೆ ಕಾವು ಪಡೆದಿದ್ದು, ಸರಕಾರದ ಮುಂದಿನ ಪ್ರತಿಕ್ರಿಯೆ ಇದೀಗ ಕುತೂಹಲ ಮೂಡಿಸಿದೆ.

Continue Reading

ದಿನದ ಸುದ್ದಿ

ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ

Published

on

Prajaseva Abhiyana: ಇನ್ಮುಂದೆ ಕಚೇರಿಗೆ ಅಲೆದಾಟ ಬೇಡ; ಜನರ ಮನೆ ಬಾಗಿಲಿಗೇ ಸರ್ಕಾರ, ಸೆ.5ರಿಂದ ‘ಪ್ರಜಾಸೇವಾ’ಗೆ ಚಾಲನೆ!

ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.

ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ ಕಚೇರಿಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ಈ ಅಲೆದಾಟ ಕಡಿಮೆ ಮಾಡಿ ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವುದು ಪ್ರಜಾಸೇವೆಯ ಪ್ರಮುಖ ಉದ್ದೇಶವಾಗಿದೆ.

ಹೈಲೈಟ್ಸ್: ಸೆ.5ರಿಂದ ಹೊಸ ಆಡಳಿತ ವ್ಯವಸ್ಥೆಗೆ ಚಾಲನೆ

  • ಸೆಪ್ಟೆಂಬರ್ 5ರಿಂದ ಕೂಡ್ಲಿಗಿಯಲ್ಲಿ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ
  • ಪ್ರತಿ ಶನಿವಾರ ತಾಲ್ಲೂಕು/ಹೋಬಳಿ ಮಟ್ಟದಲ್ಲಿ ಜನಸಂಪರ್ಕ ಸಭೆ
  • ಬುಧವಾರ ತಾಲ್ಲೂಕು, ಉಪವಿಭಾಗ ಮತ್ತು ಜಿಲ್ಲಾ ಮಟ್ಟದಲ್ಲಿ ಮೂರು ಹಂತದ ಪರಿಶೀಲನೆ
  • ಗ್ರಾಮ ಒನ್ ಕೇಂದ್ರ ಹಾಗೂ ಸಭಾ ಸ್ಥಳದಲ್ಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ವ್ಯವಸ್ಥೆ
  • 1902 ಸಹಾಯವಾಣಿ ಮತ್ತು IPGRS ಮೂಲಕ ಕುಂದುಕೊರತೆ ದಾಖಲಿಸುವ ಅವಕಾಶ

http://Visit : www.suddidina.com

ಪ್ರತಿ ಶನಿವಾರ ಜನರೊಂದಿಗೆ ನೇರ ಸಂಪರ್ಕ

ಪ್ರತಿ ಶನಿವಾರ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಸಭೆಗಳನ್ನು ಪರ್ಯಾಯವಾಗಿ ನಡೆಸಲು ನಿರ್ಧರಿಸಲಾಗಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.

ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ-ಮನೆಗೆ ಕರಪತ್ರ ವಿತರಿಸುವುದರ ಜತೆಗೆ AI ಆಧಾರಿತ ಕಾಲ್ ಸೆಂಟರ್ ಮೂಲಕ ಸಭೆಯ ದಿನಾಂಕ, ಸ್ಥಳ ಹಾಗೂ ಸಮಯದ ಕುರಿತು ಮಾಹಿತಿ ನೀಡಲಾಗುತ್ತದೆ.

ಗ್ರಾಮ ಒನ್‌ನಲ್ಲೇ ಅರ್ಜಿ ಸಲ್ಲಿಕೆ

ಜನರು ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಬಹುದು. ಸಭಾ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ.

ಈ ಸಭೆಗಳಲ್ಲಿ ಹೊಸ ಅಹವಾಲುಗಳು ಮತ್ತು ಈಗಾಗಲೇ ದೂರು ದಾಖಲಿಸಿದ್ದರೂ ಪರಿಹಾರವಾಗದ ಅಹವಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. 21 ದಿನಗಳ ಬಳಿಕವೂ ಸಮರ್ಪಕ ಪರಿಹಾರ ಸಿಗದ ಪ್ರಕರಣಗಳನ್ನೂ ಆದ್ಯತೆಯಿಂದ ಪರಿಗಣಿಸಲಾಗುತ್ತದೆ.

ಬುಧವಾರ ಮೂರು ಹಂತದ ಪರಿಶೀಲನೆ

ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ಅಹವಾಲುಗಳ ಮೇಲೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ ನಡೆಯಲಿದೆ. ಬೆಳಗ್ಗೆ 9ರಿಂದ 11ರವರೆಗೆ ತಾಲ್ಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ.

ತಾಲ್ಲೂಕಿನಲ್ಲಿ ಬಗೆಹರಿಯದ ಸಮಸ್ಯೆಗಳು ಉಪವಿಭಾಗಾಧಿಕಾರಿಗೆ, ಅಲ್ಲಿಂದ ಜಿಲ್ಲಾಧಿಕಾರಿಗೆ ಮೇಲ್ದರ್ಜೆಗೆ ವರ್ಗಾವಣೆಯಾಗಲಿವೆ. ನಿಗದಿತ ಅವಧಿಯಲ್ಲಿ ಪರಿಹಾರವಾಗದ ಪ್ರಕರಣಗಳು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಮಟ್ಟಕ್ಕೂ ಸ್ವಯಂಚಾಲಿತವಾಗಿ ಎಸ್ಕಲೇಷನ್ ಆಗುವ ವ್ಯವಸ್ಥೆ ಇರಲಿದೆ.

ಸ್ಥಳದಲ್ಲೇ ಮಂಜೂರಾತಿ, ಆನ್‌ಲೈನ್‌ನಲ್ಲಿ ಸ್ಥಿತಿ

ಅರ್ಹ ಫಲಾನುಭವಿಗಳಿಗೆ ಕೆಲವು ಯೋಜನೆಗಳ ಮಂಜೂರಾತಿ ಪತ್ರವನ್ನು ಸ್ಥಳದಲ್ಲೇ ನೀಡಲು ಅವಕಾಶವಿದೆ. ಅರ್ಜಿ ಅಥವಾ ದೂರು ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ನೈಜ-ಸಮಯದ ಸ್ಥಿತಿ ಪರಿಶೀಲನಾ ವ್ಯವಸ್ಥೆಯ ಮೂಲಕ ತಿಳಿದುಕೊಳ್ಳಬಹುದು.

ಇದಲ್ಲದೆ, ಪ್ರತಿ ಸಭೆಯ ಸಂಪೂರ್ಣ ವಿವರ, ಛಾಯಾಚಿತ್ರ, ವೀಡಿಯೋ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಲಾಗುತ್ತದೆ. ಸಾರ್ವಜನಿಕರು 1902 ಸಹಾಯವಾಣಿ ಅಥವಾ ಅಧಿಕೃತ IPGRS ಪೋರ್ಟಲ್ ಮೂಲಕವೂ ಕುಂದುಕೊರತೆ ದಾಖಲಿಸಬಹುದು.

ಆಡಳಿತಕ್ಕೆ ಹೊಣೆಗಾರಿಕೆ, ಜನರಿಗೆ ಉತ್ತರ

ಪ್ರಜಾಸೇವಾ ಅಭಿಯಾನದ ಯಶಸ್ಸು ಕೇವಲ ಸಭೆ ನಡೆಸುವುದರಲ್ಲಿ ಇಲ್ಲ; ದೂರು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹರಿಸಿ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸುವುದರಲ್ಲಿ ಇದೆ. ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳ ನಿರಂತರ ಮೇಲ್ವಿಚಾರಣೆಯ ಮೂಲಕ ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು ನೀಡಲಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸುವ ಈ ವ್ಯವಸ್ಥೆ ಆಡಳಿತದ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

Continue Reading

ದಿನದ ಸುದ್ದಿ

ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

Published

on

kalaburagi-municipal-corporation-mayor-deputy-mayor-election-congress-win
ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

ಈ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.

ಮೇಯರ್ ಸ್ಥಾನಕ್ಕೆ ಅಜಿಲ್ ಅಹಮದ್ ಗೋಲಾ

ಈ ಚುನಾವಣೆಯಲ್ಲಿ 21ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಅಜಿಲ್ ಅಹಮದ್ ಗೋಲಾ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಮತದಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ದೊರೆತಿದ್ದು, ಅವರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.

ಪಾಲಿಕೆಯ ಮುಂದಿನ ಆಡಳಿತದಲ್ಲಿ ಮೇಯರ್ ಸ್ಥಾನ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅಜಿಲ್ ಅಹಮದ್ ಗೋಲಾ ಅವರ ಆಯ್ಕೆ ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 35 ಮತಗಳು ದೊರೆತಿರುವುದು ಚುನಾವಣೆಯಲ್ಲಿ ಪಕ್ಷದ ಬಲವನ್ನು ತೋರಿಸಿದೆ.

ಉಪ ಮೇಯರ್ ಸ್ಥಾನವೂ ಕಾಂಗ್ರೆಸ್ ಪಾಲು

20ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊರೆತ ಬಹುಮತದ ಹಿನ್ನೆಲೆಯಲ್ಲಿ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿರುವುದರಿಂದ ಪಾಲಿಕೆಯ ಆಡಳಿತದ ಮೇಲೆ ಪಕ್ಷದ ಹಿಡಿತ ಮತ್ತಷ್ಟು ಬಲಗೊಂಡಿದೆ.

ಆಗಸ್ಟ್ 7ರಿಂದ ಆಗಸ್ಟ್ 29ಕ್ಕೆ ಮುಂದೂಡಿಕೆ

ಆರಂಭದಲ್ಲಿ ಈ ಚುನಾವಣೆ ಆಗಸ್ಟ್ 7ರಂದು ನಡೆಯಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಳಿಕ ಪ್ರಾದೇಶಿಕ ಆಯುಕ್ತರ ಆದೇಶದ ನಂತರ ಪರಿಷ್ಕೃತ ದಿನಾಂಕ ನಿಗದಿಪಡಿಸಿ ಆಗಸ್ಟ್ 29ರಂದು ಚುನಾವಣೆ ನಡೆಸಲಾಯಿತು.

ಅದರಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು ಮತಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ 35 ಮತಗಳನ್ನು ಪಡೆದರೆ, ಬಿಜೆಪಿ 29 ಮತಗಳಿಗೆ ಸೀಮಿತವಾಯಿತು.

ಈ ಮೂಲಕ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಾಲಿಕೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಹೊಸ ಮೇಯರ್ ಮತ್ತು ಉಪ ಮೇಯರ್ ಅವರ ಕಾರ್ಯವೈಖರಿ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Continue Reading
Advertisement

Title

ದಿನದ ಸುದ್ದಿ17 hours ago

ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್‌ ಖರೀದಿಗೂ ಎದುರಾಗುತ್ತಿದೆ ಒತ್ತಡ

ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ...

ದಿನದ ಸುದ್ದಿ17 hours ago

ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!

ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ...

ಸಿನಿ ಸುದ್ದಿ18 hours ago

ಅಭಿಮಾನಿಗಳ ಸಂಭ್ರಮದಿಂದ ದೂರ ಕಿಚ್ಚನ ಬರ್ತ್‌ಡೇ; 53ನೇ ವಸಂತದಲ್ಲಿ ಸುದೀಪ್‌ ಸಿನಿಮಾ ಸರ್ಪ್ರೈಸ್‌ಗೆ ಕೌಂಟ್‌ಡೌನ್!

ಸುದ್ದಿದಿನ,ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರಿಗೆ ಇಂದು, ಸೆಪ್ಟೆಂಬರ್‌ 2, ವಿಶೇಷ ದಿನ. 53ನೇ ವಸಂತಕ್ಕೆ ಕಾಲಿಡುತ್ತಿರುವ ಸುದೀಪ್‌, ಈ ಬಾರಿ ತಮ್ಮ...

ದಿನದ ಸುದ್ದಿ18 hours ago

ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ

ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ...

ನಿತ್ಯ ಭವಿಷ್ಯ18 hours ago

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ...

ದಿನದ ಸುದ್ದಿ2 days ago

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ: 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ

ಸುದ್ದಿದಿನ,ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವಿ ಹಾಗೂ ಪಿಯುಸಿ-ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಅವಕಾಶ ಕಲ್ಪಿಸಲು ಸಜ್ಜಾಗಿದೆ. ವಿವಿಧ ಇಲಾಖೆಗಳಲ್ಲಿನ...

ದಿನದ ಸುದ್ದಿ2 days ago

ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು

ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್‌ಗೆ ಕರೆ ನೀಡಿದೆ....

ದಿನದ ಸುದ್ದಿ2 days ago

ಅಪೌಷ್ಟಿಕತೆ ನಿವಾರಣೆಗೆ ಹೊಸ ಹೆಜ್ಜೆ; ಶಾಲೆ ಮುಗಿಯುವ ಮುನ್ನ ಮಕ್ಕಳಿಗೆ ಪೌಷ್ಟಿಕ ತಿನಿಸು

ಸುದ್ದಿದಿನ,ಹೂವಿನಹಡಗಲಿ: ಗಣಿ ಚಟುವಟಿಕೆಗಳಿಂದ ಬಾಧಿತ ಪ್ರದೇಶಗಳ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆ ಸುಧಾರಣೆಗೆ ಕರ್ನಾಟಕ ಗಣಿ ಮತ್ತು ಪರಿಸರ ಪುನಸ್ಥಾಪನೆ ನಿಗಮ (ಕೆಎಂಆರ್‌ಸಿಇ) ಹೊಸ ಹೆಜ್ಜೆ ಇಟ್ಟಿದೆ....

ಕ್ರೀಡೆ2 days ago

ಕಲ್ಲು-ಮುಳ್ಳಿನ ದಾರಿಯಲ್ಲೂ ನಿಲ್ಲದ ಹೆಜ್ಜೆ; ತಾಯಿಯ ಛಲಕ್ಕೆ ಮ್ಯಾರಥಾನ್‌ನಲ್ಲಿ ಪ್ರಥಮ ಸ್ಥಾನ

ಸುದ್ದಿದಿನ,ಮುಂಬಯಿ: ಬದುಕಿನಲ್ಲಿ ಎದುರಾಗುವ ಸಂಕಷ್ಟಗಳು ಕೆಲವೊಮ್ಮೆ ಮನುಷ್ಯನನ್ನು ಕುಗ್ಗಿಸುತ್ತವೆ. ಆದರೆ ತಾಯಿಯೊಬ್ಬಳಿಗೆ ಮಕ್ಕಳ ಭವಿಷ್ಯದ ಕನಸು ದೊಡ್ಡದಾಗಿದ್ದರೆ, ಆಕೆಯ ಮುಂದೆ ನೋವು, ಬಡತನ, ಅಡೆತಡೆ ಯಾವುದೂ ನಿಲ್ಲುವುದಿಲ್ಲ....

ದಿನದ ಸುದ್ದಿ2 days ago

ಮೈಸೂರು ದಸರಾದಲ್ಲಿ ಕಂಬಳದ ಕಳೆ: ಕೋಣಗಳ ಓಟಕ್ಕೆ ಭರದ ಸಿದ್ಧತೆ, ಪರಿಸರ ವಿವಾದವೂ ತೀವ್ರ

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಾಂಸ್ಕೃತಿಕ ವೈವಿಧ್ಯಕ್ಕೆ ಈ ಬಾರಿ ಕರಾವಳಿಯ ಕಂಬಳ ಮತ್ತೊಂದು ಆಯಾಮ ನೀಡಲಿದೆ. ಸಾತಗಳ್ಳಿಯ 25 ಎಕರೆ ಪ್ರದೇಶದಲ್ಲಿ ಕಂಬಳ ಆಯೋಜನೆಗೆ ಸಿದ್ಧತೆಗಳು...

Trending